ಚಿತ್ರ, ಘನ ಘೋರ

ಚಿತ್ರಗಳು ನೋಡುವವರ ಮೇಲೆ ಗಾಢ, ಗಂಭೀರ ಪರಿಣಾಮ ಬೀರುತ್ತವೆ. ಆಂಗ್ಲ ಭಾಷೆಯಲ್ಲಿ a picture speaks a thousand words ಮತ್ತು  a picture is worth of thousand words ಎಂತಲೂ ಹೇಳುತ್ತಾರೆ. ಚಿತ್ರಗಳು ಬರೀ ಭಾವನೆಗಳನ್ನ ರೂಪಿಸುವುದಕ್ಕೆ, ಕೆರಳಿಸುವುದಕ್ಕೆ ಮಾತ್ರವಲ್ಲ, ಹೇಳಿದ ವಿಷಯ ಸರಿಯಾಗಿ ಅರ್ಥವಾಗಿ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರಲೂ ಸಹಕಾರಿಯಾಗುತ್ತವೆ.

ಒಸಾಮಾನನ್ನು ಬಲಿ ತೆಗೆದುಕೊಂಡ ವಿಷಯವನ್ನು ಒಬಾಮಾ ಅಮೆರಿಕೆಗೂ, ವಿಶ್ವಕ್ಕೂ ಹೇಳಿದ ಕೂಡಲೇ ಎಲ್ಲರೂ ಕೇಳಿದ್ದು ಓಕೆ, ಎಲ್ಲಿದೆ ಚಿತ್ರ? ಎಂದು. ಹತ್ತು ವರ್ಷಗಳಿಂದ ಪ್ರಪಂಚ ಪೂರ್ತಿ ಜಾಲಾಡಿಯೂ ಸಿಗದ, ಈ ಹುಡುಕಾಟಕ್ಕೆ ಸುಮಾರು ಒಂದು ಟ್ರಿಲ್ಲಿಯನ್ ಡಾಲರ್ (೧೦೦ ಶತ ಕೋಟಿ ಡಾಲರ್) ಖರ್ಚು ಮಾಡಿಯೂ ಕೈಗೆ ಸಿಗದ ಒಸಾಮಾ ಏಕಾಏಕಿ ಸಿಕ್ಕಿ ಬಿದ್ದಿದ್ದು ಮಾತ್ರವಲ್ಲ ಸತ್ತೂ ಬಿದ್ದ ಎಂದರೆ? picture please, ಎಂದಿತು ಅಮೇರಿಕಾ ಮತ್ತು ವಿಶ್ವ. ಚಿತ್ರ ಘೋರವಾದ ದೃಶ್ಯದಿಂದ ಕೂಡಿದ್ದರಿಂದ ನಾವು ಕೊಡೋಲ್ಲ ಅಂತ ಶ್ವೇತ ಭವನ. gruemsome picture ತೋರಿಸಿ ಒಸಾಮಾನ ಬೆಂಬಲಿಗರನ್ನು ಮತ್ತಷ್ಟು ಹಿಂಸೆಗೆ ಪ್ರಚೋದಿಸಲು ನಾವು ತಯಾರಿಲ್ಲ, ಮಾತ್ರವಲ್ಲ “You know, that’s not who we are.”, ಎಂದರು ಅಮೆರಿಕೆಯ ಅಧ್ಯಕ್ಷರು.

ತನ್ನ ಬದುಕಿನ ಒಂದು ಘಟ್ಟದ ನಂತರ ಘೋರವಾಗಿ ಪ್ರಪಂಚವನ್ನು ಕಾಡಿದ ಒಸಾಮಾ ತನ್ನ ಸಾವಿನಲ್ಲೂ ಘನ ಘೋರನಾದ. ಈ ಶುಕ್ರವಾರ ಹೇಳಿಕೆಯೊಂದರಲ್ಲಿ ತಮ್ಮ ನಾಯಕ ಸತ್ತಿರುವುದನ್ನು ಅಲ್ಕೈದಾ ಖಚಿತಪಡಿಸಿ ಚಿತ್ರಕ್ಕಾಗಿ ಗೋಗರೆಯುತ್ತ್ತಿದ್ದ ಜನರ ಬಾಯನ್ನು ಶಾಶ್ವತವಾಗಿ ಮುಚ್ಚಿಸಿತು.

ಖಲೀಲ್ ಗಿಬ್ರಾನ್

ಹೃದಯವೇ, ನಿನ್ನಲ್ಲಿ ಯಾರಾದರೂ ಬಂದು ಆತ್ಮವೂ ಶರೀರದ ಹಾಗೆಯೇ ನಶಿಸುತ್ತದೆ ಎಂದು ಹೇಳಿದರೆ ನಿನ್ನ ಉತ್ತರ ಹೀಗಿರಲಿ; ಹೂವು ನಶ್ವರ, ಆದರೆ ಬೀಜ ಎಂದಿಗೂ ಶಾಶ್ವತ – ಖಲೀಲ್ ಗಿಬ್ರಾನ್ 

ಬೊಜ್ಜಿನ ಕಡೆಯೂ ಗಮನವಿರಲಿ

ಒಂದ್ ‘ಜಮಾನಾ’ ದಲ್ಲಿ ಡಾಕ್ಟ್ರು ಅಂದ್ರೆ ಬಿಳೀ ಕೋಟು, ಸ್ಟೆತಾ ಸ್ಕೋಪು ಮಡಗಿ ಕೊಂಡಿರೋ ವ್ಯಕ್ತಿ. ಈಗ ಈ ಅಲಂಕಾರಕ್ಕೆ ಮತ್ತೊಂದು ಭೂಷಣ ಸೇರ್ಕೊಂತು. ಅದೇ ನಮ್ ಪಾಂಡು ಟೈಲರ್ ನೇತು ಹಾಕ್ಕೊಳ್ಳೋ ಬೆವರು, ಧೂಳು, ಕೊಳಕು ತುಂಬಿದ ಟೇಪು. measurement tape. ಅದ್ಯಾಕೆ ಅಂತೀರಾ? ಕೆಳಗ್ ನೋಡ್ಕಳಿ ಉತ್ತರಕ್ಕೆ.

ಹೃದ್ರೋಗ ಬರೀ ಸ್ಥೂಲಕಾಯರಿಗೆ ಮಾತ್ರ ಅಲ್ಲ ಖಾತರಿ, ಹೊಟ್ಟೆ ಸುತ್ತಾ ಡನ್ಲಪ್ ಟೈರ್ ನಂತೆ ಸುತ್ತಿಕೊಂಡ ಬೊಜ್ಜಿನ ಒಡೆಯರಿಗೆ ಹೆಚ್ಚು ಖಾತರಿಯಂತೆ ವೈದ್ಯಕೀಯ ಸಂಶೋಧನೆ ಪ್ರಕಾರ. ನನ್ನ ತೂಕ accepted ಮತ್ತು desired limit ನಲ್ಲಿದೆ ಎಂದು ನಿರಾಳವಾಗಿ ಆಗೊಂದು ಈಗೊಂದು ಎಂದು ಬೆಣ್ಣೆ ಖಾಲಿಯನ್ನೋ, ಗುಲಾಬ್ ಜಾಮೂನನ್ನೋ ಗುಳುಂ ಮಾಡಬೇಡಿ. ತೂಕ ಕಡಿಮೆಯಿದ್ದರೆ ಮಾತ್ರ ಸಾಲದು ಬೇಡದ ಕಡೆ ಕೊಬ್ಬು ಸೇರಿ ಕೊಂಡಿದಿಯೇ ಎನ್ನುವ ಕಡೆಯೂ ಗಮನವಿರಲಿ ಎನ್ನುವುದು ವೈದ್ಯರ ಅಭಿಪ್ರಾಯ. “fat accumulated in the abdomen can be far more dangerous to your health”.

ವಿಖ್ಯಾತ New England Journal of Medicineನ ವರದಿ ಪ್ರಕಾರ ಹೊಟ್ಟೆ ಸುತ್ತಾ ಸಲೀಸಾಗಿ ಬೆಳೆಯುವ ಕೊಬ್ಬು ಕ್ಯಾನ್ಸರ್, ಪಾರ್ಶ್ವವಾಯು ಮತ್ತು ಹೃದ್ರೋಗಗಳಿಗೆ ದಾರಿ ಮಾಡಿಕೊಡುತ್ತದೆ.

ಕೆಲವರು ಬೆವರು ಸುರಿಸಿ ಜಾಗಿಂಗ್ ಮಾಡಿದ ನಂತರ ತಮ್ಮ ಕಾಲಿನ ಪಯಣವನ್ನು ಮಸಾಲೆ ದೋಸೆ, ಉದ್ದಿನವಡೆ, ವಾನಗಿ ಭಾತ್ ಮಾರುವ ಅಡ್ಡಾ ಕಡೆ ಬೆಳೆಸುತ್ತಾರೆ ಎಂದು ಕೇಳಿದ್ದೇನೆ. ಈಗಲಾದರೂ “ಬೀ ಕ್ಯಾರ್ಫುಲ್”. ಏಕೆಂದರೆ prevention is always better than cure.

ತೇರೆ ಬಿನ್ ಲಾದೆನ್…

ಲಾದೆನ್, ನೀನಿಲ್ಲದೆ… ಸಿನೆಮಾ ದೊಡ್ಡ ಸುದ್ದಿ ಮಾಡಿತು ನಮ್ಮ ದೇಶದಲ್ಲಿ. ಲಾದೆನ್ ಬಗೆಗೆ ಅಮೆರಿಕೆಯ ಅತಿ ಆಸಕ್ತಿಯ ಕುರಿತು ರಚಿಸಿದ ಈ ಚಿತ್ರ ವೀಕ್ಷಕರನ್ನು ರಂಜಿಸಿತು. ಲಾದೆನ್ ನ         enigma ರಾಜಕಾರಣಿ, ಸುದ್ದಿ ಪಂಡಿತರನ್ನು ಮಾತ್ರವಲ್ಲ ಚಿತ್ರರಂಗವನ್ನೂ ಬಾಧಿಸಿತು. ಹತ್ತು ಹಲವು ವರ್ಷಗಳಿಂದ ಒಂದೇ ಸಮನೆ ಅಮೇರಿಕಾ ಲಾದೆನ್ ಗಾಗಿ ಪ್ರಪಂಚ ಜಾಲಾಡಿದರೂ ಸಿಗದೇ ಹತಾಶವಾಗಿದ್ದಾಗ ಇದ್ದಕ್ಕಿದ್ದಂತೆ, ಯಾವ ಸುಳಿವೂ, ಮುನ್ಸೂಚನೆಯೂ ಇಲ್ಲದೆ justice is done, Laden is gone ಎಂದು ಬೆಳ್ಳಂ ಬೆಳಗ್ಗೆ  ಕೇಳಿ ತಬ್ಬಿಬ್ಬಾದ ನಮಗೆ ಲಾದೆನ್ ಸಾವು ಸಿನಿಮೀಯ ರೀತಿ ಎಂದು ಅನ್ನಿಸಿದರೆ ತಪ್ಪಾಗಲಾರದು. ಹತ್ತು ವರ್ಷಗಳಿಂದ ಅತ್ಯಾಧುನಿಕ ಉಪಗ್ರಹಗಳಿಂದ ಹಿಡಿದು ಅಮೇರಿಕನ್ ಸೈನಿಕರ high tech binocular ಗಳಿಗೂ ಸಿಗದೇ ತಪ್ಪಿಸಿಕೊಳ್ಳುತ್ತಿದ್ದ ಬಿನ್ ಲಾದೆನ್ ದಿಢೀರನೆ ಕೊಲ್ಲಲ್ಪಟ್ಟ ಎಂದರೆ ಒಂದು ರೀತಿಯ ಸಿನಿಮೀಯ ತಾನೇ?  

ಲಾದೆನ್ ಬರೀ ಅಮೆರಿಕೆಗೆ ಮಾತ್ರವಲ್ಲ, ನಮ್ಮ ದೇಶದಲ್ಲೂ ಕುತೂಹಲ, ಭಯ, ಆಕ್ರೋಶ ಬರಿಸಿದ ಹೆಸರು. ಅಮೆರಿಕೆಯ ಮೇಲೆ ಮತ್ತು ವಿಶ್ವದ ಇತರೆ ನಗರಗಳಲ್ಲಿ ತನ್ನ ಸಾವಿನ ಏಜೆಂಟರನ್ನು ಹರಿಬಿಟ್ಟ ಲಾದೆನ್ ಕೊನೆಗೂ ಸೆಣೆಸುತ್ತಾ  ಉರುಳಿ ಬಿದ್ದ ಅಮೆರಿಕೆಯ ನಾವಿಕ ದಳದ ಯೋಧರ ಗುಂಡುಗಳಿಗೆ,  ಪಾಕಿಸ್ತಾನದ “ಅಬೋಟ್ಟಾಬಾದ್” ನಗರದಲ್ಲಿ.

ಅಬೋಟ್ಟಾಬಾದ್, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಿಂದ ಕೇವಲ ೩೫ ಮೈಲು ದೂರ ಇರುವ, ಪ್ರತಿಷ್ಠಿತ ಸೈನಿಕ ತರಬೇತಿ ಕಾಲೇಜು ಹೊಂದಿದ ಈ ನಗರದಲ್ಲಿ ಬಿನ್ ಲಾದೆನ್ ಸುಮಾರು ಐದು ವರ್ಷಗಳಿಗೂ ಹೆಚ್ಚು ಕಾಲ ಅವಿತು ಕೊಂಡಿದ್ದ ಎಂದರೆ ಯಾರೂ ದಂಗಾಗುವರು. ಅಮೆರಿಕೆಯಂತೂ ಮೂರ್ಛೆ ಬೀಳುವುದೊಂದು ಬಾಕಿ. ಭಯೋತ್ಪಾದನೆ ತಡೆಯಲು, ಲಾದೆನ್ ಕ್ರುತ್ಯಗಳನ್ನು ತಡೆಯಲು ಪಾಕಿಸ್ತಾನದ ಬೆಂಬಲ ಪಡೆದಿದ್ದ ಅಮೇರಿಕಾ ಈ ಸಹಾಯಕ್ಕೆ ಕೊಡುತ್ತಿದ್ದ ಫೀಸು ವರ್ಷಕ್ಕೆ ೩ ಬಿಲ್ಲಿಯನ್ ಡಾಲರ್. ಯಾಚಕ ದೇಶ. ಇಂಥದ್ದೇ ಮತ್ತೊಂದು ಯಾಚಕ ದೇಶ ಇಸ್ರೇಲ್. ಬಿನ್ ಲಾದೆನ್ ನನ್ನು ಹುಡುಕುತ್ತಿದ್ದೇವೆ, ತಾಲಿಬಾನಿ ಗಳನ್ನು ಸದೆ ಬಡಿಯುತ್ತಿದ್ದೇವೆ ಎಂದು ಸುಳ್ಳು ಸುಳ್ಳೇ ಭರವಸೆ ನೀಡುತ್ತಾ ಅಮೆರಿಕೆಯ ಡಾಲರುಗಳ ಲಂಚವನ್ನು ಲಜ್ಜೆಯಿಲ್ಲದೆ ಸ್ವೀಕರಿಸಿದ ಪಾಕ್ ಅಮೆರಿಕೆಗೆ ಮೋಸ ಮಾಡಿತೆಂದೇ ವಿಶ್ವದ, ಅಮೆರಿಕನ್ನರ ನಂಬಿಕೆ. ಈ ರೀತಿ ಪುಕ್ಕಟೆ ಯಾಗಿ ಸಿಗುತ್ತಿದ್ದ ಸಂಪತ್ತನ್ನು ನುಂಗುತ್ತಿದ್ದ ಪಾಕಿಗೆ ಲಾದೆನ್ ಚಿನ್ನದ ತತ್ತಿ ಇಡುವ ಕೋಳಿ. main source of income. ಪಾಪ, ಲಾದೆನ್ ಸಾವಿನಿಂದ ದೊಡ್ಡ, ಭರಿಸಲಾರದ ನಷ್ಟ ಪಾಕಿಗೆ.  

ಪಾಕಿಸ್ತಾನ ಮಾತ್ರ ತನಗೆ ಲಾದೆನ್ ನ ಇರುವಿನ ಬಗ್ಗೆ ಗೊತ್ತೇ ಇಲ್ಲ ಎಂದು ಆಣೆ ಹಾಕಿ ಹೇಳಿದರೂ circumstantial evidence ಇದಕ್ಕೆ ವ್ಯತಿರಿಕ್ತ. ಈ ವಿವಾದದಲ್ಲಿ ಮತ್ತೊಂದು ಸಮಸ್ಯೆ ಇದೆ. ಅಮೇರಿಕಾ ಮತ್ತು ಪಾಕಿಸ್ತಾನ chronic liars. ಶುದ್ಧ ಸುಳ್ಳರು. ಈ ಇಬ್ಬರ ತಗಾದೆ ಬಗೆಹರಿಸಲು ಇಲ್ಲಿದೆ ಲಿಟ್ಮಸ್ ಟೆಸ್ಟ್. ಲಾದೆನ್ ಎಲ್ಲಿದ್ದಾನೆ ಎನ್ನುವುದು ಪಾಕಿಗೆ ತಿಳಿದಿತ್ತೆ? ಪಾಕಿನ ಸಹಾಯವಿಲ್ಲದೆ ಅಮೆರಿಕೆಯ ಬ್ಲಾಕ್ ಹಾಕ ಹೆಲಿಕಾಪ್ಟರ್ ಗಳು ಹೇಗೆ ತಾನೇ ಲಾದೆನ್ ಇರುವಲ್ಲಿಗೆ ಬರಲು ಸಾಧ್ಯ? ಅಲ್ಕೈದಾ ಸಂಘಟನೆಯ ಕೆಂಗಣ್ಣಿಗೆ ಗುರಿಯಾಗಬಹುದು ಎನ್ನುವ ಭೀತಿ ಪಾಕಿಗೆ ತಾನು ಈ ಸಾಹಸದಲ್ಲಿ ಪಾಲು ಗೊಂಡಿಲ್ಲ ಎಂದು ಹೇಳಲು ಪ್ರೇರೇಪಿಸುತ್ತಿರಬಹುದೇ? ಪಾಕಿಸ್ತಾನದ ಪರಿಸ್ಥತಿ ಅಡಕ್ಕೊತ್ತರಿ ಯಲ್ಲಿ ಸಿಕ್ಕ ಅಡಿಕೆಯಂತೆ. ಲಾದೆನ್ ಇರುವ ಸ್ಥಳ ತೋರಿಸಿ ಅಮೆರಿಕೆಗೆ ಸಹಕಾರ ನೀಡಿದೆ ಎಂದರೆ ಅಲ್ ಕೈದಾ ಬಿಡೋಲ್ಲ, ಲಾದೆನ್ ಎಲ್ಲಿದ್ದಾನೆ ಎಂದು ತನಗೆ ತಿಳಿದಿಲ್ಲ ಎಂದರೆ ಅಮೇರಿಕಾ ಬಿಡೋಲ್ಲ. ಸುಮಾರು  ಐದು ವರ್ಷಗಳ ಕಾಲ ದೊಡ್ಡ ಪಾಕಿಸ್ತಾನದ ರಾಜಧಾನಿಯ ಹಿತ್ತಲಿನಲ್ಲಿ,  ಬಂಗಲೆಯೊಂದರಲ್ಲಿ ವಾಸಿಸುತ್ತಿದ್ದ ಲಾದೆನ್ ಬಗ್ಗೆ ಪಾಕ್ ಸೈನ್ಯಕ್ಕೆ, ಸರಕಾರಕ್ಕೆ ತಿಳಿದಿಲ್ಲ ಎಂದರೆ ದೊಡ್ಡ ಆಶ್ಚರ್ಯವೇ. ಒಂದು ವೇಳೆ ಪಾಕಿಗೆ ಲಾದೆನ್ ಪಾಕಿನಲ್ಲಿ ಇರುವ ಅರಿವು ಇಲ್ಲದಿದ್ದರೆ ಅಮೇರಿಕಾ ತಾನು ನೀಡುವ ಉದಾರ ಧನ ಸಹಾಯ ಮುಂದುವರೆಸಬಹುದು. ಅಥವಾ ಲಾದೆನ್ ಪಾಕಿಸ್ತಾನದಲ್ಲಿ ಇರುವುದನ್ನು ಅಮೆರಿಕೆಗೆ ತಿಳಿಸದೇ ಡಬಲ್ ಗೇಂ ಆಡಿದ್ದರೆ ಪಾಕಿಸ್ತಾನವನ್ನು ದಾರಿಗೆ ತರುವ ಕೆಲಸ ಅಮೇರಿಕಾ ಶೀಘ್ರ ಶುರು ಮಾಡಬೇಕು. ಇದೇ ಟೆಸ್ಟು. Litmus ಟೆಸ್ಟು.    

ಬಿನ್ ಲಾದೆನ್ ಇಲ್ಲದೆ ಪಾಕ್ ಹೇಗೆ ತಾನೇ ಜೀವಿಸೀತು ಎನ್ನುವುದೀಗ ಆಸಕ್ತಿಕರ ಪ್ರಶ್ನೆ. ಪ್ರೀತೀ,  ನೀನಿಲ್ಲದೆ ನಾ ಹೇಗಿರಲಿ… ಎಂದು ಶೋಕ ಗೀತೆ ಹಾಡುತ್ತಿರಬಹುದೇ ಪಾಕಿಗಳು?

೨೦೦೧ ರ ಅಮೆರಿಕೆಯ ವಿರುದ್ಧದ ಧಾಳಿಗೆ ಬಿನ್ ಲಾದೆನ್ ನನ್ನು ನೇರ ಹೊಣೆಯಾಗಿರಿಸಿದ ಜಾರ್ಜ್ ಬುಶ್, ಬಿನ್ ಲಾದೆನ್ wanted, dead or alive ಎಂದು ಘೋಷಿಸಿದ. ಅಮೆರಿಕೆಯ ಮೇಲೆ ನಿರ್ದಯೀ, ಭೀಕರ ಧಾಳಿ ಮಾಡಿ ತಾನು ಒಂದು ದಿನ ಪೂರ್ತಿ ರಹಸ್ಯ ಅಡಗು ತಾಣವೊಂದರಲ್ಲಿ ದಿನ ಕಳೆಯುವಂತೆ ಮಾಡಿದ ಬಿನ್ ಲಾದೆನ್ ನ ತಲೆಗೆ ೨೫ ಮಿಲ್ಲಿಯನ್ ಡಾಲರ್ ಮೊತ್ತದ ಬೆಲೆಯನ್ನೂ ಕಟ್ಟಿದ ಬುಶ್.  ಹೊಗೆಯುಗುಳುತ್ತಾ ನೆಲಕ್ಕುರುಳಿದ ನ್ಯೂಯಾರ್ಕ್ ನ ಗಗನ ಚುಂಬಿ ಕಟ್ಟಡಗಳು ಅಮೆರಿಕನ್ನರ ಚಿತ್ತ ಕಲಕಿದವು. ಕ್ರುದ್ಧ ಅಮೇರಿಕಾ ಬಿನ್ ಲಾದೆನ್ ಅಡಗಿದ್ದ ಆಫ್ಘಾನಿಸ್ತಾನ ವನ್ನು ಆಕ್ರಮಣ ಮಾಡಿತು. ಬಿನ್ ಲಾದೆನ್ ಎಲ್ಲಿದ್ದರೂ ಹೊಗೆ ಹಾಕಿ ಹೊರತೆಗೆಯುತ್ತೇನೆ ಎಂದು ಘರ್ಜಿಸಿದ ಬುಶ್ ಆಫ್ಘಾನಿಸ್ತಾನದ ಗುಡ್ಡಗಾಡು ಗಳನ್ನು ಮಾತ್ರವಲ್ಲ ಅಲ್ಲಿನ ತೋರಾ ಬೋರಾ ಗವಿ ಸಮುಚ್ಛಯಗಳನ್ನು ಜಾಲಾಡಿದ. ಸೋವಿಯೆಟ್ ಸೇನೆಗೆ ಚಳ್ಳೆ ಹಣ್ಣು ತಿನ್ನಿಸಿದ್ದ, ಸ್ವತಃ ಅಮೆರಿಕನ್ನರಿಂದಲೇ ತರಬೇತಿ ಪಡೆದ, ಸ್ವಾತಂತ್ರ್ಯ ಹೋರಾಟಗಾರ ಎಂದು ರೋನಾಲ್ಡ್ ರೇಗನ್ನರಿಂದ ಹೊಗಳಿಸಿಕೊಂಡಿದ್ದ  ಬಿನ್ ಲಾದೆನ್ ರಂಗೋಲಿ ಕೆಳಗೆ ತೂರಿಕೊಳ್ಳುವುದನ್ನು ಕರಗತ ಮಾಡಿಕೊಂಡ.  

ಬಿನ್ ಲಾದೆನ್,  wanted, dead or alive ಎಂದ ಅಮೇರಿಕಾ ಲಾದೆನ್ ಇರುವ ಮನೆಯ ಮೇಲೆ ಧಾಳಿ ಮಾಡಿ, ೪೦ ನಿಮಿಷಗಳ ಕಾಳಗದಲ್ಲಿ ಎರಡು ಗುಂಡುಗಳನ್ನು ಲಾದೆನ್ ತಲೆಗೆ ಸಿಡಿಸಿ ಕೊಂದಿದ್ದಾರೂ ಏಕೆ? ಅವನನ್ನು ಜೀವಂತ ಸೆರೆ ಹಿಡಿದು, ಅಮೆರಿಕೆಯ USS COLE , ಆಫ್ರಿಕಾದ ದಾರುಸ್ಸಲಾಮ್, ಸ್ಪೇನ್ ನ MADRID, ಲಂಡನ್, ಸೌದಿ ಅರೇಬಿಯಾದ ದಹರಾನ್, ಇರಾಕ್, ಸೋಮಾಲಿಯಾ, ಇಂಡೋನೇಷ್ಯಾದ ಬಾಲಿ ಮುಂತಾದ ನಗರಗಳ ಮೇಲೆ ಧಾಳಿ ಮಾಡಿದ ಈತನನ್ನು ವಿಚಾರಣೆ ಮಾಡಬಹುದಿತ್ತಲ್ಲ. ಅಮೆರಿಕೆಯ ಕಾರ್ಯ ವೈಖರಿ ಆ ದೇಶದಷ್ಟೇ ನಿಗೂಢ. ಕ್ರಿಸ್ಟಫರ್ ಕೊಲಂಬಸ್ ಕಂಡು ಹಿಡಿಯುವವರೆಗೂ ನಿಗೂಢವಾಗಿದ್ದ ದೇಶವಲ್ಲವೇ ಅಮೇರಿಕಾ? ಈತನನ್ನು ಸೆರೆ ಹಿಡಿದು ಅಮೇರಿಕಾ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿ ಕೊಳ್ಳಲು ಇಷ್ಟ ಪಡಲಿಲ್ಲ. ವಿಚಾರಣೆ ವೇಳೆ ಬಿನ್ ಲಾದೆನ್ ಬಾಯಿ ಬಿಟ್ಟರೆ ತಾವು ಕೇಳಲು ಇಚ್ಛಿಸುವುದಕ್ಕಿಂತ ಸ್ವಲ್ಪ ಹೆಚ್ಚನ್ನೇ ಬಡಬಡಿಸಬಹುದು. ಈ ಕಸಿವಿಸಿಯಿಂದ ಪಾರಾಗಲು ಇರುವ ಒಂದೇ ದಾರಿ ಎಂದರೆ ನೇರ ಆಕ್ರಮಣ. ಈ ಆಕ್ರಮಣದಲ್ಲಿ ಅಮೇರಿಕಾ ಯಶಸ್ಸನ್ನು ಕಂಡಿತು.         

ತಾನು ಕರಿಯನಾದ ಒಂದೇ ಕಾರಣಕ್ಕೆ ದಿನವೂ ಬಿಳಿ ಅಮೆರಿಕನ್ನರ ಕುಹಕಕ್ಕೆ, ಅವಹೇಳನಕ್ಕೆ  ಗುರಿಯಾಗುತ್ತಿದ್ದ ಒಬಾಮ ಕೊನೆಗೆ ತನ್ನ ಜೀವನದ ಅತಿ ದೊಡ್ಡ ಅವಮಾನವನ್ನು ಎದುರಿಸಬೇಕಾಯಿತು. ಒಬಾಮಾರ ಜನನ ಪ್ರಮಾಣ ಪತ್ರವನ್ನು ಬಲ ಪಂಥೀಯ ರಿಪಬ್ಲಿಕನ್ ಪಕ್ಷ ಕೇಳಿತು. ಒಬಾಮಾ ತನ್ನ ಜನನ ಪ್ರಮಾಣ ಪತ್ರದ ಜೊತೆ ಜೊತೆಗೇ ಅಮೆರಿಕನ್ನರ ಸಿಂಹಸ್ವಪ್ನನಾಗಿದ್ದ ಲಾದೆನ್ ನ ಸಾವಿನ ಪ್ರಮಾಣ ಪತ್ರವನ್ನೂ ಅಮೆರಿಕನ್ನರಿಗೆ ನೀಡಿ ತಾನು ಕಾರ್ಯಕ್ಷಮತೆಯಲ್ಲಿ ಯಾವ ಬಿಳಿ ಅಧ್ಯಕ್ಷನಿಗೂ ಕಡಿಮೆಯಲ್ಲ ಎನ್ನುವುದನ್ನು ತೋರಿಸಿ ಕೊಟ್ಟರು.   

ಒಸಾಮಾ ಬಿನ್ ಮುಹಮ್ಮದ್ ಬಿನ್ ಅವಾದ್ ಬಿನ್ ಲಾದೆನ್.  ೫೪ ವರ್ಷ ಪ್ರಾಯದ, ಆರಡಿ ಮೂರಿಂಚು ಎತ್ತರದ ಸ್ಫುರದ್ರೂಪಿ ಮತ್ತು ಆಗರ್ಭ ಶ್ರೀಮಂತ ಆಫ್ಘನ್ ಗುಡ್ಡ ಗಾಡಿನ ಜನರ ವಿಶ್ವಾಸ, ಪ್ರೀತಿ, ಅಭಿಮಾನ ಗಳಿಸಲು ಕಾರಣವಾಗಿದ್ದಾದರೂ ಏನು? ಜನರೊಂದಿಗೆ ಸುಲಭವಾಗಿ, ಆತ್ಮೀಯತೆಯಿಂದ ಬೆರೆಯುತ್ತಿದ್ದ ಈತ ಸೌಮ್ಯ ಮಾತುಗಾರಿಕೆಯಿಂದ, ತನ್ನ ಉದಾರ ಸ್ವಭಾವದಿಂದ ಅಲ್ಲಿನ ಯುವಜನರ ಮನ ಗೆದ್ದಿದ್ದ. ಕೋಟ್ಯಾಧೀಶ ಮನೆತನದಿಂದ ಬಂದ ಈತ ಐಶಾರಾಮದ ಬದುಕನ್ನು ಬಿಟ್ಟು ಆಫ್ಘನ್ ಗುಡ್ಡಗಾಡಿನಲ್ಲಿ ಒಣಗಿದ ಚಪಾತಿ ತಿನ್ನುತ್ತಾ ತಮ್ಮೊಂದಿಗೆ ಇರುತಿದ್ದ ಈತನನ್ನು ಕಂಡು ಜನ ಮಾರುಹೋದರು. ಸೋವಿಯೆಟ್ ಸೈನ್ಯದೊಂದಿಗೆ ಹೋರಾಡಿದ ಈತ ಓರ್ವ ಸೈನಿಕನೊಂದಿಗೆ hand to hand combat ನಲ್ಲಿ ಸೈನಿಕನ್ನು ಕೊಂದು ಅವನ kalashnikov ಬಂದೂಕನ್ನು ವಶಪಡಿಸಿ ಕೊಂಡಿದ್ದ. ಈ ಬಂದೂಕು ಅವನ ಅಭಿಮಾನದ ಸ್ವತ್ತಾಗಿತ್ತು.

ಈತ ಆರಂಭಿಸಿದ ಅಲ್ ಕೈದಾ ಒಂದು ಸಂಘಟನೆಯೋ ಆಗಿರದೆ ಒಂದು ತೆರನಾದ ideology ಆಗಿತ್ತು. ಸದಸ್ಯ ಶುಲ್ಕವಾಗಲೀ, ಯಾವುದೇ formal induction ಆಗಲಿ ಬೇಕಿಲ್ಲದ ಈ ವಿಚಾರಧಾರೆಗೆ ಮೂರು ಅಂಶಗಳೇ ಉರುವಲಾಗಿ ಕೆಲಸ ಮಾಡುತ್ತಿದ್ದವು. ಆಕ್ರೋಶ, ನಿರಾಶೆ, ನಿಸ್ಸಹಾಯಕತೆ (anger, frustration, desperation).  ಒಂದು ಕಡೆ ಮುಸ್ಲಿಂ ದೇಶಗಳಲ್ಲಿನ ಆಳುವವರ ಭ್ರಷ್ಟಾಚಾರ ಸಾಲದು ಎಂಬಂತೆ ಅಮೆರಿಕೆಯ ಮೇಲಿನ ವಿಪರೀತ ಅವಲಂಬನೆ ಮತ್ತು ಅರಬ್ಬರ ಸಂಪತ್ತನ್ನು ಲೂಟಿ ಹೊಡೆಯುತ್ತಾ ಇಸ್ರೇಲ್ ದೇಶವನ್ನು ಸಾಕುತ್ತಿದ್ದ ಅಮೆರಿಕೆಯ ಆಟ ಈತನಲ್ಲಿ ಆಕ್ರೋಶ ಹುಟ್ಟಿಸಿತ್ತು. ಸೌದಿ ದೊರೆಗಳ ವಿರುದ್ಧವೂ ಈತ ಸಮರ ಸಾರಿದ ನಂತರ ಇವನ ವಿರೋಧಿಗಳ ಪಟ್ಟಿ ದೊಡ್ಡದಾಗುತ್ತಾ ಹೋಯಿತು. ಈತನ ನೂರಾರು ಹಿಂಬಾಲಕರಲ್ಲಿ ಹಲವರನ್ನು ಕೊಂದು, ನೂರಾರು ಜನರನ್ನು ಜೈಲಿಗೆ ತಳ್ಳಿ ಅಲ್ ಕೈದಾ ಪಿಡುಗನ್ನು ಕೊನೆಗಾಣಿಸಿದ ಸೌದಿ ಸರಕಾರ ಭಯೋತ್ಪಾದನೆ ತಡೆಯುವಲ್ಲಿ ಯಾವ ಕ್ರಮ ತೆಗೆದು ಕೊಳ್ಳುವುದಕ್ಕೂ ತಾನು ಹೇಸುವುದಿಲ್ಲ ಎಂದು ವಿಶ್ವಕ್ಕೆ ತೋರಿಸಿ ಕೊಟ್ಟಿತು.   

ಯಹೂದಿಗಳ ಕೈಯ್ಯಲ್ಲೂ, ಅಮೆರಿಕೆಯ ಕೈಯ್ಯಲ್ಲೂ ಮುಸ್ಲಿಮರ ಮಾರಣ ಹೋಮ ನೋಡಿದ ಬಿನ್ ಲಾದೆನ್ ಪ್ರತಿಕ್ರಯಿಸಿದ್ದು ಹಿಂಸಾ ಮಾರ್ಗದಿಂದ. ಸುಮಾರು ೧೫೦೦ ವರ್ಷಗಳ ಚರಿತ್ರೆ ಇರುವ ಇಸ್ಲಾಂ ಧರ್ಮಕ್ಕೆ ಬಹುಶಃ ಸ್ವತಃ ಮುಸ್ಲಿಂ ಆದ ಬಿನ್ ಲಾದೆನ್ ಮಾಡಿದಷ್ಟು ಅಪಕಾರ ಬೇರಾರೂ ಮಾಡಿರಲಾರ ರೇನೋ? ತನ್ನ ಕುಕೃತ್ಯಗಳಿಂದ ಎರಡು ಯುದ್ಧಗಳಿಗೆ ಕಾರಣನಾದ, ಎರಡು ದಶಲಕ್ಷಕ್ಕೂ ಅಧಿಕ ಮುಸ್ಲಿಮರ ಸಾವಿಗೆ ಸಾಕ್ಷಿ ನಿಂತ ಬಿನ್ ಲಾದೆನ್ ಅದ್ಯಾವ ರೀತಿ ತಾನು ನಂಬಿದ ಧರ್ಮದ ಸೇವೆ ಮಾಡಿದನೋ ಅವನೇ ಬಲ್ಲ.  ವಿಶ್ವದ ಡಜನ್ ಗಟ್ಟಲೆ ಹೆಚ್ಚು ನಗರಗಳಲ್ಲಿ ಸಾವು ನೋವನ್ನು ತಂದು ನಿಲ್ಲಿಸಿದ ಬಿನ್ ಲಾದೆನ್ ಕೊನೆಗೂ ಹಿಂಸೆಯ ಮೂಲಕವೇ ತನ್ನ ಜೀವ ಕಳೆದುಕೊಂಡ. ಇಂಡೋನೇಷ್ಯಾದ “ಬಾಲಿ” ಯಿಂದ ಹಿಡಿದು ಆಫ್ರಿಕಾದ  ನೈರೋಬಿ ವರೆಗೆ ಸಾವು ನೋವಿನ ಕರಾಳ ಕಂಬಳಿಯನ್ನು ಹರಡಿದ ಬಿನ್ ಲಾದೆನ್ “ವಿನಾಕಾರಣ ಒಬ್ಬನನ್ನು ಕೊಂದರೆ ಇಡೀ ಮನುಕುಲವನ್ನು ಕೊಂದಂತೆ” ಎಂದ ಹೇಳಿದ ತನ್ನ ಭಗವಂತನ ಮುಂದೆ ನಿಂತು ಯಾವ ಸಮಜಾಯಿಷಿ ನೀಡುವನೋ?

ಬಿನ್ ಲಾದೆನ್ ನಿರ್ಗಮನದಿಂದ ನಮ್ಮೀ ವಿಶ್ವ ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಗೆ ಕಾಲಗರ್ಭದಲ್ಲಿ ಅಡಗಿದೆ  ಉತ್ತರ.

ಟ್ವಿಟ್ಟರ್ ನಲ್ಲಿ ಸಿಕ್ಕಿದ್ದು:

Kentucky Fried Chicken ಶುರು ಮಾಡಿದ “ಕರ್ನಲ್ ಸ್ಯಾಂಡರ್ಸ್” ನ ನಿಧನದೊಂದಿಗೆ KFC ಯ franchising ನಿಲ್ಲಲಿಲ್ಲ. ಅದೇ ರೀತಿ ಅಲ್ ಕೈದಾ ಸ್ಥಾಪಕನ ಸಾವಿನಿಂದ ಅಲ್ ಕೈದಾ ಸಹ ಮುಗಿಯೋದಿಲ್ಲ.  ಆದರೆ ಇದೇ ವೇಳೆ, ಅಂತರಾಷ್ಟ್ರೀಯ ಖ್ಯಾತಿಯ, ಸಂಪಾದಕ ಭಾರತೀಯ ಮೂಲದ ಫರೀದ್ ಜಕರಿಯಾ ಹೇಳಿದ್ದು, loss of a symbol can end a movement.  

ವಿ. ಸೂ: ನನ್ನ ಈ ಲೇಖನ ಬಿನ್ ಲಾದೆನ್ ನ ಅವಸಾನ ಮತ್ತು ಅವಸಾನದ ಕ್ಷಣಗಳನ್ನು ಅಮೆರಿಕೆಯ ವೃತ್ತಾಂತವನ್ನು ಆಧರಿಸಿದ್ದು. ಯಾವುದೇ independent confirmation ಯಾರಿಗೂ ಲಭ್ಯವಾಗಿಲ್ಲ.      

 

Cow corner ಅಂದರೇನು?

ಕ್ರಿಕೆಟ್ ಮೈದಾನದ ಡೀಪ್ ಮಿಡ್-ವಿಕೆಟ್ ಮತ್ತು ವೈಡ್ ಲಾಂಗ್ ಆನ್ ಮಧ್ಯೆ ಬರುವ ಅಂಗಳಕ್ಕೆ “ಕೌ ಕಾರ್ನರ್” ಅಂತ ಕರೀತಾರೆ. ಅಂದರೆ “ದನದ ಮೂಲೆ” ಅಂತ. ಈ ಅಂಗಳದ ಕಡೆ ದಾಂಡಿಗ ಶಾಟ್ ಹೊಡೆಯೋದು ಅಪರೂಪವಂತೆ, ಹಾಗಾಗಿ ಈ ಪ್ರದೇಶದಲ್ಲಿ ದನಗಳು ಮೇಯುತ್ತಿದ್ದರೆ ಅವುಗಳಿಗೆ ಚೆಂಡು ಬಡಿಯುವ ಅಪಾಯವಿರುವುದಿಲ್ಲವಂತೆ. ನಿರಾತಂಕವಾಗಿ ಅವು ಆಟ ಸವಿಯುತ್ತಾ ಹುಲ್ಲು ಮೇಯಬಹುದು. ಕ್ರಿಕೆಟ್ ಆಟಕ್ಕೂ ‘ರಾಸು’ ಗಳಿಗೂ ಇರುವ ಸಂಬಂಧ ಏನು ? ಕ್ರಿಕೆಟ್ ಕುರಿ ಕಾಯುವವರ ಆಟ ತಾನೇ? ಕುರಿಯೋ, ರಾಸೋ, ಇವೆರಡೂ ಮೇಯುವುದು ಹುಲ್ಲನ್ನೇ, ಅಲ್ಲವೇ?

ಬೆಟ್ಟಿಂಗ್ ಭಯ

ಭಾರತ ಪಾಕ್ ನಡುವೆ ೨೦೧೧ ರ ವಿಶ್ವ ಕ್ರಿಕೆಟ್ ಕಪ್ ಸೆಮಿಫೈನಲ್ ಮೊಹಾಲಿಯಲ್ಲಿ. ಎಲ್ಲರ ದೃಷ್ಟಿಗಳೂ ಮೊಹಾಲಿ ಕಡೆಗೂ ಮತ್ತು ಕ್ರಿಕೆಟಿಗರ ಕಡೆಗೂ ನೆಟ್ಟಿರುವುದರಲ್ಲಿ ಸಂಶಯವಿಲ್ಲ. ವಿಶ್ವದ ಅತಿ ಸ್ಪರ್ದಾತ್ಮಕ ಕ್ರೀಡೆ ಎಂದರೆ ಭಾರತ ಪಾಕ್ ನಡುವಿನ ಜಿದ್ದಾ ಜಿದ್ದಿನ ಕ್ರಿಕೆಟ್. ಸಹಜವಾಗಿಯೇ ಭಾರತೀಯರಿಗೂ ಪಾಕಿಗಳಿಗೂ ತಮ್ಮ ತಂಡವೇ ಗೆಲ್ಲಬೇಕು ಎನ್ನುವ ಅದಮ್ಯ ಆಸೆ ಮನದಲ್ಲಿದ್ದರೂ ಕ್ರಿಕೆಟ್ ಮೋಹಕವಾಗಿ ರಂಜಿಸಬಲ್ಲುದೆ ಎನ್ನುವುದನ್ನು ಕಾದು ನೋಡಬೇಕು. ಬ್ಯಾಟಿಂಗ್ ನಲ್ಲಿ ಈಗಿನ ಭಾರತವನ್ನ ಮೀರಿಸುವ ತಂಡ ಮತ್ತೊಂದಿಲ್ಲ, ಆದರೆ ಬೌಲಿಂಗ್ ನಲ್ಲಿ ನಮ್ಮ ಸಾಧನೆ ಎಂದಿಗೂ ಉತ್ಕೃಷ್ಟ ಮಟ್ಟದ್ದಾಗಿರಲಿಲ್ಲ. ಆದರೂ ವೇಗದ ಬೌಲಿಂಗ್ ನಲ್ಲಿ ಜಹೀರ್ ಖಾನ್ ಪ್ರದರ್ಶಿಸುತ್ತಿರುವ ಸಾಹಸ ಪ್ರಶಂಸಾರ್ಹವೆ. ಜಹೀರ್ ರನ್ನು ನಾಯಕ ಯಾವ ರೀತಿಯಲ್ಲಿ ಬಳಸಿಕೊಳ್ಳುವರು ಎನ್ನುವುದರ ಮೇಲೆ ಅವಲಂಬಿತ ಈ ಪಂದ್ಯದ ಫಲಿತಾಂಶ. ಯಾರು ಯಾರನ್ನು ಹೇಗೆ ಬೇಕಾದರೂ ಬಳಸಿಕೊಳ್ಳಲಿ, ಕೋಟ್ಯಂತರ ಭಾರತೀಯರ ಆಸೆ ಮಾತ್ರ ಈಡೇರಲಿ.

ಈ ನಡುವೆ ಪಾಕ್ ದೇಶದ ಆಂತರಿಕ ವ್ಯವಹಾರಗಳ ಸಚಿವ ಪಾಕ್ ಕ್ರೀಡಾಗಾರರಿಗೆ ಬೆಟ್ಟಿಂಗ್ ಬಲೆಗೆ ಬೀಳದಂತೆ ಕಟು ಎಚ್ಚರಿಕೆ ನೀಡಿದ್ದಾರೆ. ಪಾಕಿಗಳ ಹಿಂದಿನ ಪುರಾಣ ಓದಿದವರಿಗೆ ಈ ಎಚ್ಚರಿಕೆ ಸಮಂಜಸವಾಗಿ ಕಂಡರೂ ತಾನು ಈ ಪಂದ್ಯದಲ್ಲಿ ಸೋತರೆ ಮಗುಮ್ಮಾಗಿ ಬೆಟ್ಟಿಂಗ್ ಗುಮ್ಮವನ್ನು ತನ್ನ ತಂಡದ ಮೇಲೆ ಹೊರೆಸಿ ಮಾನ ಕಾಯ್ದು ಕೊಳ್ಳುವ ಹುನ್ನಾರವೇನಾದರೂ ಇರಬಹುದೇ ಈ ಎಚ್ಚರಿಕೆ ಘಂಟೆಯ ಹಿಂದೆ? ಒಂದು ರೀತಿಯ pre-emptive ತಂತ್ರ. ಎಷ್ಟಿದ್ದರೂ ರೆಹಮಾನ್ ಮಲಿಕ್ ರಾಜಕಾರಣಿ, ತನ್ನ ಕುಬುದ್ಧಿಯನ್ನು ಎಂದಿಗಾದರೂ ಬಿಟ್ಟಾನೆಯೇ? ಮಂತ್ರಿಯ ಎಚ್ಚರಿಕೆಯ ಬಗ್ಗೆ ಒಬ್ಬ ಓದುಗ ಪ್ರತಿಕ್ರಯಿಸಿದ್ದು ಹೀಗೆ: 

ಮಂತ್ರಿಯ ಎಚ್ಚರಿಕೆಯು ತನ್ನದೇ ಮನೆಯ ಮುಂದೆ “ವೇಶ್ಯಾವಾಟಿಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ” ಎನ್ನುವ ಸೂಚನಾ ಫಲಕ ನೇತು ಹಾಕಿದಂತೆ. ಹೇಗಿದೆ ಡೈಲಾಗು?

ಚಂದ್ರ ಮತ್ತಷ್ಟು ಹತ್ತಿರ, ಆಪ್ತ

ಚಂದ್ರ ಮತ್ತಷ್ಟು ಹತ್ತಿರ, ಆಪ್ತ. ೧೯ ವರ್ಷಗಳ ನಂತರ ಇಂದು ಚಂದ್ರ ನಮಗೆ ಹತ್ತಿರ ಬಂದಿದ್ದಾನಂತೆ. ಭೂವಾಸಿಗಳಲ್ಲಿ ಅದ್ಯಾವ ಹೆಗ್ಗಳಿಕೆ ನೋಡಿ ಬಂದನೋ ಇನ್ನಷ್ಟು ಸಮೀಪ ನನಗೆ ತಿಳೀದು, ಆದರೆ ಸೂಪರ್ ಮೂನ್, ಮೆಗಾ ಮೂನ್, ಡಬ್ಬಲ್ ಮೂನ್ ಹಾಗೆ ಹೀಗೆ ಎಂದು ಕೆಲದಿನಗಳಿಂದ ಕೇಳುತ್ತಾ ಇದ್ದುದರಿಂದ ಸಂಜೆಯ ದೂರದ ನೆಂಟನಿಗಾಗಿ ಕಾದು ಕೂತೆ. ಮಧ್ಯಾಹ್ನದ ಉರಿ ಸೂರ್ಯ, ಸಂಜೆಯಾಗುತ್ತಾ ಬೆಳ್ಳಿ ಬಣ್ಣ ಪಡೆದುಕೊಂಡು, ಸ್ವಲ್ಪ ನಂತರ ತನ್ನ ಮೈಯ್ಯನ್ನು ಕಿತ್ತಳೆ ಬಣ್ಣಕ್ಕೆ ಬದಲಿಸಿಕೊಂಡು ತನ್ನ ವಧು ಕೆಂಪು ಸಮುದ್ರದ ತೆಕ್ಕೆಗೆ ಜಾರಿದ ಕೆಲ ಹೊತ್ತಿನಲ್ಲೇ ಕಳ್ಳ ನಗೆ ಬೀರುತ್ತಾ ಬಂದ ನಮ್ಮ ಮಾಮ. ಚಂದಾಮಾಮ. ಅರೆ, ಇದೇನಿದು,  ೧೯ ವರ್ಷಗಳ ನಂತರ ಹತ್ತಿರ ಬಂದ ಈ ಮಾಮ ಥೇಟ್ ಹಿಂದಿನ ಮಾಮನ ಥರವೇ ಇದ್ದ. ಮುಖದಲ್ಲಿ ಸ್ವಲ್ಪ ಹೆಚ್ಚು ಮಾಂಸ ತುಂಬಿಕೊಂಡು ನಳನಳಿಸುತ್ತಾ ಬರಬಹುದು ಎಂದೆಣಿಸಿದ್ದ ನನಗೆ ಕಾಣಲು ಸಿಕ್ಕಿದ್ದು ಅದೇ age old ಮಾಮ. (ಅಂಕಲ್ ಅಂತ ಅವನನ್ನು ಕರೆಯಲು ನನಗೆ ಇಷ್ಟವಿಲ್ಲ. ಬಸ್ ಸ್ಟಾಂಡ್ ನಲ್ಲಿ ಕೈ ಚಾಚಿ ಬೇಡುವವನೂ, ಬಸ್ಸಿನ ಸೀಟಿಗಾಗಿ ಜಗಳ ಕಾಯುವವರೆಲ್ಲಾ ಅಂಕಲ್ ಗಳೇ ಆದ್ದರಿಂದ ನಮ್ಮ ಚಂದಾ ಮಾಮನಿಗೆ ಆಂಗ್ಲ ಪ್ರಯೋಗ ಬೇಡ.). ನನ್ನ ಬರಿಗಣ್ಣಿಗೆ ಇವನು ಅದೇ ಗಾತ್ರದ ಮಾಮ. ಮುಖದ ತುಂಬಾ freckles ಇದ್ದರೂ ತನ್ನ ಕಾಂತಿಯನ್ನು ತನ್ನನ್ನು ಸುತ್ತುವರೆದ ಮೋಡಗಳಿಗೂ ನೀಡುತ್ತಾ aloof ಆಗಿ ಆಗಸಕ್ಕೆ ಅಂಟಿ ಕೊಂಡ ಮಾಮ. ಬಹುಶಃ ಇವನ ನಿಖರವಾದ ಅಳತೆಗೆ ಸ್ಟೆತಾಸ್ಕೋಪು, ಪೆರಿಸ್ಕೋಪು, ಟೆಲಿಸ್ಕೋಪು ಇವ್ಯಾವುದೂ ನನ್ನಲ್ಲಿಲ್ಲದೆ ಇರೋದ್ರಿಂದ ನನಗೆ ಹಳೇ ಮಾಮನ ದರ್ಶನದ ಭಾಗ್ಯ ಮಾತ್ರಾ.  ಸೂಪರ್ ಮೂನ್ ವಿದ್ಯಮಾನದಲ್ಲಿ ಸೂರ್ಯ , ಭೂಮಿ ಮತ್ತು ಚಂದಿರರು ಒಂದೇ ರೇಖೆಯಲ್ಲಿ ಇದ್ದು ಚಂದ್ರ ಮತ್ತು ಭೂಮಿಗಳು ಸ್ವಲ್ಪ ಸಮೀಪಕ್ಕೆ ಬರುತ್ತವಂತೆ. ಸೂಪರ್ ಮೂನ್ ಕಾರಣ, ಪ್ರವಾಹ, ಭೂಕಂಪ, ಜ್ವಾಲಾ ಮುಖಿ, ಬಿರುಗಾಳಿಗಳೂ ಸಂಭವಿಸಬಹುದಂತೆ. ಬ್ರೇಕಿಂಗ್ ನ್ಯೂಸ್ ನಲ್ಲಿ ಇದುವರೆಗೂ ಯಾವುದೇ ಅಹಿತಕರ ನೈಸರ್ಗಿಕ ಅವಘಡ ಸಂಭವಿಸಿಲ್ಲ.

ಒಂದೇ ಒಂದು ಅವಘಡ ಏನೆಂದರೆ ಕಳೆದ ಹಲವು “ವಿಶ್ವಕಪ್ ಪಂದ್ಯಾವಳಿ” ಯ ೩೫ ಪಂದ್ಯಗಳಲ್ಲಿ ಮೊಟ್ಟ ಮೊದಲ ಬಾರಿಗೆ ಆಸ್ಟ್ರೇಲಿಯಾ ಸೋಲನ್ನು ಕಂಡಿದ್ದು ಅದೂ ದುರ್ಬಲ, ಪಾಕ್ ತಂಡದ ಕೈಯ್ಯಲ್ಲಿ.     

ಹೀಗೇ ಸುಮ್ಮನೆ: ಸೂಪರ್ ಮೂನ್ ಎನ್ನುವ ಪದವನ್ನು ಶುರು ಮಾಡಿದ್ದು HOROSCOPE ಪತ್ರಿಕೆಯ ಜ್ಯೋತಿಷ್ಯಕಾರ Richard Nolle.

೯೯೯೯

ಒಂಭತ್ತು ಸಾವಿರದ ಒಂಭೈನೂರ ತೊಂಭತ್ತೊಂಭತ್ತು, (೯೯೯ ); ಈ ಫಿಗರ್ ನೋಡಿ “ಬಾಟಾ” ದವರ ಎಕ್ಕಡ ಅಥವಾ ಬೂಟ್ ಗಳು ನೆನಪಿಗೆ ಬಂತೇ? ಹೌದು ಅವರೇ ತಾನೇ ಈ ರೀತಿಯ ಫುಲ್ ನಂಬರ್ ಗಳ ದಡದ ತುದಿಗೆ ಬಂದು ನಿಲ್ಲೋದು? ಸಾವಿರ ಎಂದು ಬಿಟ್ಟರೆ ಜನ ಹೌಹಾರುವರು ಎಂದು ೯೯.೯೯ ಅಂತ ಬೆಲೆ ಇಟ್ಟು ನೂರು ರೂಪಾಯಿ ಪೂರ್ತಿಯಾಗಿ ಪೀಕಿಸಿ ಕೊಂಡು ಒಂದು ಪೈಸೆಯ ಚೇಂಜ್ ಸಹ ಕೊಡದೆ ನೂರು ರೂಪಾಯಿ ಕೊಟ್ಟೆ ಈ ಚಪ್ಪಲಿಗೆ ಎಂದು ಹೇಳಲೂ ಭಯ ಆಗುವಂತೆ ಮಾಡಿದ್ದು ? ನೂರು ರೂಪಾಯಿಗೆ ಒಂದು ಪೈಸೆ ಕಡಿಮೆ ಕೊಟ್ಟು ನೂರು ಕೊಟ್ಟೆ ಎಂದು ಹೇಳೋದು ನಾಗರೀಕರ ಲಕ್ಷಣ ಅಲ್ಲ, ಅಲ್ಲವೇ? ಹಾಳು ಪುರಾಣ ಬಿಡಿ, ಈ ೯೯೯೯ ಬಾಟಾ ದ ಎಕ್ಕಡ ಬೆಲೆಯೂ ಅಲ್ಲ, ಯಾವುದೋ ಎಮೆರ್ಜೆನ್ಸಿ ನಂಬರ್ ಸಹ ಅಲ್ಲ. ಇದು ನನ್ನ ಪ್ರೀತಿಯ ಊರಿನ, ಪ್ರೀತಿಯ ಹಳೇ ಸೇತುವೆ ಮೇಲೆ ದೌಡಾಯಿಸಿದ ಜನರ ಸಂಖ್ಯೆ. ಅಂದರೆ ಹಳೇ ಸೇತುವೆ ಬ್ಲಾಗ್ ಅನ್ನು ಇದುವರೆಗೆ ೯೯೯೯ ಜನ ನೋಡಿದ್ದಾರೆ. ಒಂದು ರೀತಿಯ ಶುಭ ಸಂಖ್ಯೆ, ಈ ಶುಭ ಕಾಮನ ಹುಣ್ಣಿಮೆಯಂದು. ಸೂಪರ್ ಮೂನ್ ಹೇಳಿ ಕೊಳ್ಳುವಂಥ ಸೂಪರ್ ಆಗಿ ಕಂಗೊಳಿಸದಿದ್ದರೂ ಈ ಸಂಖ್ಯೆ ಮಾತ್ರ ನನ್ನಲ್ಲಿ ಒಂದು ತೆರನಾದ ಸಂಚಲನ ತಂದಿದ್ದಂತೂ ನಿಜವೇ.  

ನನ್ನ ಬರಹ ನೋಡಿದ ಜನರಿಗೆ ನಾನು ಬರಹಗಾರ ಅಲ್ಲ ಎಂದು ಅನ್ನಿಸಿದರೆ ನನ್ನ ಮೇಲೆ ಸೂಪರ್ ಮೂನ್ ಆಗಲಿ, ವಿಶಾಲವಾದ ಆಗಸವಾಗಲಿ ಕಳಚಿ ಬೀಳೋಲ್ಲ. ನನ್ನಲ್ಲಿ ಕೀಳರಿಮೆ ಸಹ ಮನೆ ಮಾಡೋಲ್ಲ. ಯಾರೋ ಒಬ್ಬರು ಹೇಳಿದಂತೆ ನಾನು ಗಟ್ಟಿ ಮನುಷ್ಯ. ಎಷ್ಟಿದ್ದರೂ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇರುವ ನಗರಿಯವನಲ್ಲವೇ ನಾನು? 

ಪುಕ್ಕಟೆ ಸಿಗುವ ಆಸೆಗೆ ಬಲಿ ಬಿದ್ದು ಶುರು ಮಾಡಿದ್ದು ಈ ಧಂಧೆ. ಬರೆಯುವ ಧಂಧೆ.  ಅದೇನು ಪುಕ್ಕಟೆ ಅಂತ ಜೊಳ್ಳು ಸುರಿಸಿದಿರಾ? ನಾಚಿ ಕೊಳ್ಳಬೇಡಿ, ಮನುಷ್ಯನ ಜಾಯಮಾನವೇ ಅದು. ಪುಕ್ಕಟೆ ಸಿಕ್ಕಿದ್ದು ಬ್ಲಾಗ್ ಆರಂಭಿಸುವ ಸೌಲಭ್ಯ.  ಕರ್ನಾಟಕ ರಾಜ್ಯದ ೧೦ ಲಕ್ಷದ, ೧೦ ಲಕ್ಷ ಪೂರ್ತಿ ಕೈಗೆ ಬರದ  ಲಾಟರಿಯಂತೂ ಅಲ್ಲ. ವರ್ಡ್ಪ್ರೆಸ್, ಬ್ಲಾಗ್ಸ್ಪಾಟ್, “tumblr” ಮುಂತಾದವರು ಜನರಿಗೆ ತಮ್ಮ ಬರವಣಿಗೆಯ ತೀಟೆ ತೀರಿಸಿಕೊಳ್ಳುವುದಕ್ಕಾಗಿ ಬ್ಲಾಗ್ ಸೈಟ್ ಆರಂಭಿಸಿಕೊಳ್ಳುವ ಸವಲತ್ತು ನೀಡಿದಾಗ ಮುಗಿಬಿದ್ದು ಕೈ ಚಾಚಿದವರಲ್ಲಿ ನಾನೂ ಒಬ್ಬ.  ಬ್ಲಾಗಿಗೊಂದು ಹೆಸರು ಕೊಡಬೇಕು. ಚಿತ್ರ ವಿಚಿತ್ರ ಹೆಸರುಗಳು ಮನಃ ಪಟಲದ ಮೇಲೆ ಹಾದು ಹೋದರೂ ಸೊರಗಿದ ಭದ್ರಾ ನದಿಯ ಸಂಗಾತಿ ಹಳೇ ಸೇತುವೆ ಹೆಸರನ್ನು ಇಟ್ಟೆ. ಶಾಲೆಗೆ ಚಕ್ಕರ್ ಹೊಡೆದು ಇದೇ ಹಳೇ ಸೇತುವೆ ದಾಟಿ ಕನಕ ಮಂಟಪಕ್ಕೆ ಬಂದು ಪುಢಾರಿಗಳ ಭಾಷಣ ಕೇಳುತ್ತಿದ್ದೆ. ಎಲ್ರೂ ಚಕ್ಕರ್ ಹೊಡೆದು ಸಿನೆಮಾಕ್ಕೂ, ಕ್ರಿಕೆಟ್ ಆಡೋಕ್ಕೂ ಹೋದ್ರೆ ಈ ಅಬ್ಬೇಪಾರಿ ಏನು ಪುಡ್ಹಾರಿ, ಗಿಡ್ಹಾರಿ ಅಂತಿದ್ದಾನೆ ಎಂದು ಮೂಗಿನ ಮೇಲೆ ಬೆರಳಿಡ ಬೇಡಿ. ರಾಜಕಾರಣ ಎಂದರೆ ೧೯೭೭ ರಿಂದ ನನಗೆ ತುಂಬಾ ಇಷ್ಟ. ನನ್ನ ಪಕ್ಷ ಜನತಾ ಪಕ್ಷ. ಮೊರಾರ್ಜಿ ಭಕ್ತ. ಚರಣ್ ಸಿಂಗ್ ಮೊರಾರ್ಜಿಗೆ ಕೈ ಕೊಟ್ಟಾಗ ತಲೆ ಮೇಲೆ ಕೈಹೊತ್ತು ಕೂತ ಮಿಡ್ಲ್ ಸ್ಕೂಲ್ ಬಾಲಕ ನಾನು. ಮಾರ್ವಾಡಿ ಸ್ನೇಹಿತನೊಬ್ಬ ಇಂದಿರಾ ನಮ್ ತಾಯಿ ಎಂದಾಗ, ನಾನೇಕೆ ಇವನನ್ನು ಮೀರಿಸಬಾರದು ಎಂದು ಮೊರಾರ್ಜಿ ನಮ್ಮಪ್ಪ ಎಂದು ಹೇಳಿ embarrass ಆದವನು.  ನನ್ನ ಬ್ಲಾಗ್ ನ “ಹಳೇ ಸೇತುವೆ” ಹೆಸರು ಕೆಲವರಿಗೆ ಹಿಡಿಸಿತೂ ಕೂಡಾ, ಅದರೊಂದಿಗೆ ಸವಾರಿಯಾಗಿ ಬಂದ ಬ್ಲಾಗ್ ಪೋಸ್ಟ್ ಗಳೂ ಕೆಲವರಿಗೆ ಇಷ್ಟವಾದವು. ಇನ್ನೂ ಕೆಲವರಿಗೆ “ತುಂಬಾ” ಇಷ್ಟವಾಗಿ ಅಜೀರ್ಣಕ್ಕೂ ದಾರಿ ಮಾಡಿ ಕೊಟ್ಟಿತು. ಒಂದಂತೂ ಸತ್ಯ, ಮೆಚ್ಚಿದವರು, ಮೆಚ್ಚದವರು ನನ್ನಲ್ಲಿ ಹುರುಪನ್ನಂತೂ ತುಂಬಿದರು ನನ್ನ ಬರಹ ಮುಂದುವರೆಯಲಿ ಎಂದು. ಕನ್ನಡಿಗ ಉದಾರಿ, ಸಹೃದಯಿ ಎನ್ನುವ ಮಾತಿಗೆ ನನ್ನ ಬಡ, ಸುಣ್ಣದ ಕಲ್ಲಿನ ಸೇತುವೆಗೆ ಬಂದ ಪ್ರತಿಕ್ರಿಯೆಗಳೇ ಸಾಕ್ಷಿ.   

ಮೆಚ್ಚಿದವರಿಗೂ, ಮೆಚ್ಚದವರಿಗೂ ನನ್ನ ಸವಿನಯ, ಗೌರವಪೂರ್ವಕ  ಪ್ರಣಾಮಗಳು.

ಕುರಿಗಳು ಸಾರ್, ಕುರಿಗಳಲ್ಲಾ ಸಾರ್

ಪ್ರಾಣಿಗಳಿಗೆ ಹಿಂಸೆ ಆದಾಗ ಪ್ರಾಣಿ ದಯಾ ಸಂಘಕ್ಕೆ ಕರೆ ಕೊಡೋದು ವಾಡಿಕೆ. ಬಂದ್ ಗಾಗಿ ಕರೆ ಅಲ್ಲ, ಬಂದು ಪ್ರಾಣಿಯನ್ನು ಉಳಿಸಿ ಅಂತ ಹೇಳೋಕೆ ಕರೆ. ಜಟಕಾ ಗಾಡಿಯ ಮಾಲೀಕ ಬಳಲಿದ, ಹಸಿದ, ನಿತ್ರಾಣವಿಲ್ಲದೆ ಒಲ್ಲೆ ಎಂದರೂ ಬಿಡದೆ ಬಾರು ಕೋಲಿನಿಂದ ಬಾರಿಸಿ ತನ್ನ ಗಾಡಿಯಲ್ಲಿರುವ ಪೋಸ್ಟ್ ಮಾರ್ಟಂ ದಾರಿ ಹಿಡಿದ ಹೆಣ ವನ್ನು ಅದು ಸೇರಬೇಕಾದ ಸ್ಥಳ ತಲುಪಿಸಲು ಕುದುರೆಗೆ ಕೊಡುವ ಹಿಂಸೆ ನೋಡಿ, ನೋಡಲಾರದೆ ಪ್ರಾಣಿ ದಯಾ ಸಂಘಕ್ಕೆ ಬುಲಾವ್ ಕೊಡೋದು.  ಹೌದು ಪ್ರಾಣಿಗಳಿಗೆ ದಯೆ ತೋರಿಸಬೇಕಾದ್ದೆ. ಆದರೆ ಈ ಬುಲಾವ್ ಬರೀ ಕುದುರೆ ಕತ್ತೆ ನಾಯಿಗಳಿಗೆ ಮಾತ್ರ ಏಕೆ, ಕೋಳಿ ಕುರಿಗಳಿಗೂ ಏಕಿಲ್ಲ ಅವೂ ಪ್ರಾಣಿಗಳೇ ಅಲ್ಲವೇ ಎಂದು ಕೆಲವರ ಸಂಶಯ. ಒಬ್ಬರ ಸಂಶಯಕ್ಕೆ ಪಾರ್ಶ್ವ ಉತ್ತರವಾಗಿ ಮತೊಬ್ಬರು ಹೇಳಿದರು, ಕುರಿ ಏನೋ ಪ್ರಾಣಿಯೇ, ಆದರೆ ಕೋಳಿ ಪ್ರಾಣಿಯಲ್ಲ, ಅದು ಪಕ್ಷಿ ಎಂದು. ಪ್ರಾಣಿಯೋ , ಪಕ್ಷಿಯೋ ಪ್ರಾಣವಂತೂ ಇದೆಯಲ್ರೀ ಅಂತೀರಾ? ಸೊಳ್ಳೆಗೂ ಇದೆ ಪ್ರಾಣ, ಹಾಗೆಯೇ ತಿಗಣೆಗೂ ಸಹ, ಅಲ್ವರ? ಸೊಳ್ಳೆಯನ್ನು ಕೊಲ್ಲಲು ಈಗ ಚೀನೀ ತಂತ್ರಜ್ಞಾನ ಉಪಯೋಗಿಸುತ್ತಿಲ್ಲವೇ ನಾವು. ಟೆನ್ನಿಸ್ ಬೆಡಗಿ ಸಾನಿಯಾ ಥರ ಎಲೆಕ್ಟ್ರೋನಿಕ್ ಬ್ಯಾಟ್ ಹಿಡಿದು ಚಟ ಚಟ, ಚಟ, ಚಟಾ ಅಂತ ಅಟ್ಟಾಡಿಸಿಕೊಂಡು ಸುಡುತ್ತಿಲ್ಲವೇ ಸೊಳ್ಳೆ ಗಳನ್ನು?  ನಮ್ಮ ಕಿವಿಗಳ ಸುತ್ತಾ ಹಾರುತ್ತಾ, ತಪ್ಪಿಸಿಕೊಳ್ಳುತ್ತಾ, ಒಂದು ರೀತಿಯ ಅಣಕದ ಶಬ್ದ ಮಾಡಿ ನಂತರ ನಮ್ಮ ರಕ್ತ ಹೀರುವ  ಸೊಳ್ಳೆಗಳನ್ನು ಹಾಗೆ ಬಿಡಿ ಅಂತೀರಾ ಎಂದು ಕೇಳಬೇಡಿ. back hand, fore hand, ಹೀಗೆ ನಾನಾ ರೀತಿ ರಾಕೆಟ್ ತಿರುಗಿಸಿ ಫ್ರೈ ಮಾಡಿ ಸೊಳ್ಳೆಗಳನ್ನು.   ಹಾಗಾದರೆ ಈ ಮೇಲಿನ ಪುರಾಣ ಯಾಕೆ? ಕುರಿ, ಕೋಳಿ, ಪ್ರಾಣಿ ದಯೆ, ಬ್ಲಾ, ಬ್ಲಾ, ಬ್ಲಾ ಎಂದಿರಾ?

ಈಗ ಪ್ರಾಣಿ ಹಿಂಸೆ ವಿಷಯ ಬಂದಾಗ ಕೆಲವರು by choice ಅಥವಾ by taste ಕಾರಣ ಆರಿಸಿಕೊಂಡ ಆಹಾರ ಪದ್ಧತಿಗೆ ಕೊನೆ ಹಾಡಿ ಕುರಿ ಕೋಳಿ ಭಕ್ಷ್ಯ ಮಾಡುವ ಪರಿಪಾಠಕ್ಕೆ ನಾಂದಿ ಹಾಡಬೇಕು. ನಮ್ಮ ದೇಶದಲ್ಲಿ ಕುರಿ ಕೋಳಿ ಹಂದಿ ಮುಂತಾದುವುಗಳ ಹಿಂಸೆಗೆ ನಾಂದಿ ಹಾಡಿದರೆ ವಿಎಟ್ನಾಮ್, ಚೈನಾ, ಮುಂತಾದ ದೇಶಗಳಲ್ಲಿ ನಾಯಿ, ಜಿರಲೆ ಇವುಗಳ ಹತ್ಯೆಗೂ ಹಾಡಬೇಕು ಇತಿಶ್ರೀ. ಅಯ್ಯೋ ನಾಯ್ ತಿಂತಾರಾ ಚೈನಾದಲ್ಲಿ ಎಂದು ಮೂಗೆಳೆಯಬೇಡಿ. ಆರ್ಥಿಕ ಸಂಕಷ್ಟ ಜನರನ್ನು ಬಡಿದು ಕುರಿ ಕೋಳಿ, ಹಂದಿ ದುಬಾರಿ ಯಾದಾಗ ನಾಯಿಗಳು “ಮೆನ್ಯು ಪಟ್ಟಿ”- menu-  ಗೆ ಬಡ್ತಿ ಪಡೆದು ಕೊಳ್ಳುತ್ತವೆ ಕೆಲವು ದೇಶಗಳಲ್ಲಿ. ಕುರಿ ಕೋಳಿ ಹತ್ಯೆ ಕುರಿತ ಚರ್ಚೆಯಲ್ಲಿ ಓದುಗರೊಬ್ಬರು ಕೇಳಿದರು, “ಪ್ರಾಣ ಇರುವುದೆಲ್ಲ ಪ್ರಾಣಿಗಳೇ ….. ಜಗದೀಶ್ ಚಂದ್ರಬೋಸರು ತೋರಿಸಿದ್ದಾರೆ ಸಸ್ಯಗಳೀಗೂ ಪ್ರಾಣವಿದೆ ಹಾಗೂ ಅವೂ ಉಸಿರಾಡುತ್ತವೆ ಎಂದು. ಹಾಗಾಗಿ ಪ್ರಾಣಿ ದಯಾಸಂಘದವರು ಪ್ರಾಣವಿರುವ ಎಲ್ಲವನ್ನೂ ರಕ್ಷಿಸಲು ಮುಂದಾಗಬೇಕು ಎನ್ನುವುದು ನನ್ನ ಕೋರಿಕೆ!!!!!” ಓಹ್, ಇದೆಂಥಾ ಬಾಂಬ್ ಅಪ್ಪಾ! ಹಾಗಾದರೆ ನಾವು ತಿನ್ನೋದೇನನ್ನು? ನನಗೆ ಗೊತ್ತಿಲ್ಲ. ಆದರೆ ಅದುನ್ ತಿನ್ನೋದ್ ಬ್ಯಾನ್ ಮಾಡಿ, ಇದುನ್ ತಿನ್ನೋದನ್ ಬ್ಯಾನ್ ಮಾಡಿ ಎನ್ನುವವರಿಗೆ ಮತ್ತೊಂದು ಉತ್ತರ ಹೀಗೆ..

“ಅನುಕೂಲ ಶಾಸ್ತ್ರ” ದ proponent ಗಳಿಗೆ ತಮ್ಮದೇ ಆದ ತರ್ಕಗಳಿರುತ್ತವೆ, ಆ ತರ್ಕಗಳಿಗೆ ವಿವೇಚನೆ ಅಥವಾ reasoning ಕೆಲಸಕ್ಕೆ ಬಾರದ ಸಂಗತಿಗಳು, ಹಾಗೆಯೇ “ಅನುಕೂಲ ಶಾಸ್ತ್ರ” thrive ಆಗೋದು ನಂಬರ್ ಗೇಂ ನಲ್ಲಿ. ಸಂಖ್ಯೆ ಹೆಚ್ಚಿದ್ದರೆ ಅವರು ಹೇಳಿದ್ದೇ ಸರಿ, ಈ ವಿಷಯದಲ್ಲಿ ಮಾತ್ರ ಇವರುಗಳು truly democratic.
ತುರೇ ಮಣೆ ಕಯ್ಯಿಂದ ನಿರ್ದಯವಾಗಿ ತುರಿಸಿಕೊಳ್ಳುವ ತೆಂಗಿನಕಾಯಿ ಮತ್ತು ಹರಿಯುವ ಚಾಕುವಿನ ಅಡಿ ದಯನೀಯವಾಗಿ ನಲುಗುವ ಈರುಳ್ಳಿ ಬಗ್ಗೆ ಇವರುಗಳಿಗೆ ಕನಿಕರ ಭಾವ ತೋರಿದಾಗ ಅವುಗಳನ್ನು ಒಳಗೊಂಡ ತಿನಿಸಿಗೂ ಬರುತ್ತದೆ ಸಂಚಕಾರ.

ಈಗ ಚರ್ಚೆ ಪರಿಸಮಾಪ್ತಿ. ನಡೀರಿ ಮಿಲ್ಟ್ರಿ ಹೋಟೆಲ್ ಕಡೆ.  ಚೀನಿಯರು ನಮ್ಮ menu ಮೇಲೆ ಇನ್ನೂ ಧಾಳಿ ಮಾಡಿಲ್ಲ ತಾನೇ? ಇಲ್ದಿದ್ರೆ, ನಾಯ್, ಜಿರಲೆ….ಅಯ್ಯೋ….

ಜಪಾನ್ ದುರಂತ ಮತ್ತು ಹಾಸ್ಯ

ಜಪಾನ್ ದುರಂತದಿಂದ ದಿಗ್ಭ್ರಾಂತವಾದ ವಿಶ್ವ ಜಪಾನೀಯರಿಗೆ ತಮ್ಮ ಅನುಭೂತಿ, ಸಂತಾಪ, ಪ್ರಾರ್ಥನೆಗಳನ್ನು ಒಂದು ಕಡೆ ಅರ್ಪಿಸುತ್ತಿದ್ದರೆ  ಮತ್ತೊಂದು ಕಡೆ ಅಲ್ಲಿನ ಸಾವು ನೋವಿನ ಬಗ್ಗೆ ಯಾವ ನೋವೂ ಇಲ್ಲದೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೀಳು ಅಭಿರುಚಿಯ ಜೋಕುಗಳನ್ನು ಸಿಡಿಸುತ್ತಿದ್ದಾರೆ ಕೆಲವರು.

ಅಮೆರಿಕೆಯ ಚಿತ್ರ ಸಾಹಿತ್ಯ ಲೇಖಕನೊಬ್ಬ ಜಪಾನ್ ದುರಂತದ ಬಗ್ಗೆ ಟ್ವೀಟಿಸಿದ್ದು ಹೀಗೆ; “ಜಪಾನಿನ ಭೂಕಂಪನದ ಬಗ್ಗೆ ಒಳ್ಳೆಯ ಭಾವನೆ ಬರಬೇಕಾದರೆ ಪರ್ಲ್ ಹಾರ್ಬರ್ ಸಾವಿನ ಸಂಖ್ಯೆ ಬಗ್ಗೆ ಗೂಗ್ಲಿಸಿ ನೋಡಿ”

೧೯೪೧ ರಲ್ಲಿ ಜಪಾನೀ ನಾವಿಕ ಪಡೆ ಅಮೆರಿಕೆಯ ಹವಾಯಿ ದ್ವೀಪದ ಪರ್ಲ್ ಹಾರ್ಬರ್ ಮೇಲೆ ನಡೆಸಿದ ಅಚ್ಚರಿದಾಯಕ ಆಕ್ರಮಣದಲ್ಲಿ ೨೦೦೦ ಸಾವಿರಕ್ಕೂ ಹೆಚ್ಚು ಜನ ಸತಿದ್ದರು. ಅದಕ್ಕೂ ಹೆಚ್ಚಾಗಿ ಈ ಆಕ್ರಮಣ ಅಮೆರಿಕೆಯ ಸೇನಾ ಪ್ರತಿಷ್ಠೆಗೆ ಭಾರೀ ಪೆಟ್ಟನ್ನೂ ನೀಡಿತ್ತು. ಈ ಆಕ್ರಮಣವನ್ನು ಗಮನದಲ್ಲಿಟ್ಟು ಕೊಂಡು ಪ್ರಸಕ್ತ ನೈಸರ್ಗಿಕ ವಿಕೋಪ ಕಾರಣ ಜಪಾನಿನಲ್ಲಿ ಸಂಭವಿಸಿದ ಅಗಾಧ ಸಾವು ನೋವಿಗೆ ಈತನ ಮನಸ್ಸು ಪ್ರತಿಸ್ಪಂದಿಸಲು ವಿಫಲವಾಯಿತು. ರಾಜಕೀಯ ಕಾರಣಗಳಿಗಾಗಿ ನಡೆದ ಆಕ್ರಮಣಕ್ಕೆ ಸೇಡು ಎನ್ನುವಂತೆ ಟ್ವೀಟಿಸುವ ಈತನಿಗೆ ಸಂದು ಹೋದ ಚರಿತ್ರೆ ಬಗ್ಗೆ ಮರುಗುವುದು ಹುಂಬತನ ಎನ್ನುವುದು ತಿಳಿಯದೆ ಹೋಯಿತು. ಇಂದು ಜಪಾನಿನ ಮೇಲೆ ಎರಗಿದ ನಿಸರ್ಗ ನಾಳೆ ತನ್ನ ದೇಶದ ಮೇಲೂ ಎರಗಬಾರದು ಎನ್ನುವ ಖಾತರಿ ಇಲ್ಲ ಎನ್ನ್ವುಉದು ಈ ಸಾಹಿತಿಗೆ ಅರಿಯದೆ ಹೋಯಿತು.   

ಮೇಲೆ ಹೇಳಿದ ಚಿತ್ರಸಾಹಿತಿಯ ಟ್ವೀಟ್ ಬಗ್ಗೆ ಗುಲ್ಲೆದ್ದು, ಪ್ರತಿಭಟನೆ ಬಂದಾಗ ಅವನು ಹೇಳಿದ್ದು, ನಾನು ಟ್ವೀಟಿ ಸುವಾಗ ೨೦೦ ಜನ ಮಾತ್ರ ಸತ್ತಿದ್ದರು, ಈಗ ೧೦ ಸಾವಿರಕ್ಕೆ ಮುಟ್ಟಿದೆ ಸಾವಿನ ಸಂಖ್ಯೆ, ನನ್ನ ಸಂವೇದನಾ ರಹಿತ ಕಾಮೆಂಟ್ ಗಳಿಗೆ ಕ್ಷಮೆಯಿರಲಿ”. ೨೦೦ ಜನ ಸತ್ತರೆ ಈತನಿಗೆ ದೊಡ್ಡ ವಿಷಯವಲ್ಲ. ಅದು ಗಂಭೀರವೂ ಅಲ್ಲ. ಅಮೆರಿಕೆಯ ದಿವಂಗತ ಸೆನಟರ್ ಟೆಡ್ ಕೆನಡಿಯ ಸಾಕು ನಾಯಿ “ಸ್ಪ್ಲಾಶ್” ಇತ್ತೀಚೆಗೆ ಸತ್ತಾಗ ಅದು ದೊಡ್ಡ ಸುದ್ದಿ. ಭೂಕಂಪದಲ್ಲಿ ಸತ್ತ ಜನರಿಗೆ ತಮಾಷೆಯ ಟ್ವೀಟ್. ಇದು ಸಂಸ್ಕಾರ.

ಈಗ ಮತ್ತೊಬ್ಬ ಹಾಸ್ಯನಟನ ಹಾಸ್ಯದ ಟ್ವೀಟ್ ನೋಡಿ; “ಜಪಾನೀಯರು ತುಂಬಾ ಮುಂದುವರಿದವರು, ಅವರು ಸಮುದ್ರ ತೀರಕ್ಕೆ ಹೋಗುವುದಿಲ್ಲ, ಬದಲಿಗೆ ತೀರವೇ ಅವರಿದ್ದಲ್ಲಿಗೆ ಬರುತ್ತದೆ”. ದೈತ್ಯಾಕಾರದ ಸುನಾಮಿ ಅಲೆಗಳು ೨೦೦ ರಿಂದ ೫೦೦ ಕಿಲೋ ಮೀಟರ್ ವೇಗದಲ್ಲಿ ಸೆನ್ಡಾಯ್ ನಗರದ ಮೇಲೆ ಅಪ್ಪಳಿಸಿ ಹತ್ತಾರು ಸಾವಿರ ಜನ ಸತ್ತಾಗ ಬಂದ ಶೋಕತಪ್ತ ಟ್ವೀಟ್ ಇದು. ಇದು ಬಿಳಿಯರಿಗೆ ಹಾಸ್ಯ. ಅಭಿವ್ಯಕ್ತಿ ಸ್ವಾಂತ್ರ್ಯ. ಬಿಳಿಯರಲ್ಲದ ಜನರ ಮೇಲೆ ಅವರಿಗಿರುವ ಅನುತಾಪ ಅಷ್ಟಕ್ಕಷ್ಟೇ. ಜಪಾನೀಯರನ್ನೂ, ಚೀನೀಯರನ್ನೂ ಹಳದಿ ಚರ್ಮದವರು ಎಂದು ತಮಾಷೆ ಮಾಡುತ್ತಾರಂತೆ ಪಾಶ್ಚಾತ್ಯರು.

ಆಧುನಿಕ ಬದುಕಿನ blackberry ಸಂಸ್ಕೃತಿ ಕಾರಣ ಮನುಷ್ಯ ಮತ್ತೊಬ್ಬರ ಕಷ್ಟಗಳಿಗೆ ಸ್ಪಂದಿಸಲು, ಅನುಕಂಪ ತೋರಲು ಸೋಲುತ್ತಿದ್ದಾನೆ ಎಂದರೆ ಉತ್ಪ್ರೇಕ್ಷೆ ಆಗಬಹುದೇ?       

ಭೂತ ಕಾಲದ ಬಗ್ಗೆ ತಲೆ ಕೆಡಿಸಿಕೊಳ್ಳುವವರಿಗೆ ಒಬ್ಬ ಮಹನೀಯ ಹೇಳಿದ್ದು;

the past is a foreign country; they do things differently there