“ಪೆರು” ವಿಗೆ ಈ ವರುಷದ ನೊಬೆಲ್ ಸಾಹಿತ್ಯ ಪ್ರಶಸ್ತಿ



 

ಸಾಹಿತ್ಯದಲ್ಲಿ ಈ ವರ್ಷ ನೊಬೆಲ್ ಗಿಟ್ಟಿಸಿದ ಲ್ಯಾಟಿನ್ ಅಮೇರಿಕೆಯ “ಪೆರು” ದೇಶದ ಮಾರಿಯೋ ವರ್ಗಾಸ್ ಲೌಸ  ಕಾಗದ ಪುಸ್ತಕ ಪ್ರಿಯರು. “ಇ” ಪುಸ್ತಕಗಳು ಮತ್ತು ಇವನ್ನ ಓದಲು ಅನುಕೂಲ ಮಾಡಿಕೊಡುವ ಇಲೆಕ್ಟ್ರೋನಿಕ್ ಗೆಜೀಟ್ ಗಳು ಎಬ್ಬಿಸುತ್ತಿರುವ ಬಿರುಗಾಳಿಗೆ ಶತಮಾನಗಳ ನಮ್ಮ ಮಿತ್ರ “ಬಡಪಾಯಿ ಕಾಗದ” ತೂರಿ ಹೋಗುವುದು ಅವರಿಗೆ ಇಷ್ಟವಲ್ಲ.

ಮಾರಿಯೋ ವರ್ಗಾಸ್ ಅವರ ಪ್ರಥಮ ಪುಸ್ತಕ ೧೯೬೪ ರಲ್ಲಿ ಪ್ರಕಟ. ಬರಹದ ೪೬ ವರುಷಗಳ ಕಾಲದಲ್ಲಿ ವಿಶ್ವದ ಅತ್ಯುನ್ನತ ಪ್ರಶಸ್ತಿಗೆ ಭಾಜನರು ಈ ಲೇಖಕರು. ಶುಭ ಮುಂಜಾನೆ ಎನ್ನುವ ಸಂದೇಶದ ಬೆನ್ನಲ್ಲೇ ತಮಗೆ ನೊಬೆಲ್ ಸಿಕ್ಕಿತು ಎನ್ನುವ ಸುದ್ದಿಯೂ ಬಂದಿತು. ಇವರ ಆಸಕ್ತಿ ಬರೀ ಸಾಹಿತ್ಯ ಕೃಷಿಗೆ ಮಾತ್ರ ಸೀಮಿತವಲ್ಲ, ಅನ್ಯಾಯದ ವಿರುದ್ಧದ ಜನರ ಹೋರಾಟದಲ್ಲೂ ಭಾಗಿಯಾಗಿ (ನಮ್ಮ ಅರುಂಧತಿ ರಾಯ್ ರೀತಿ) ಹಲವು ಸಂಕಷ್ಟಗಳನ್ನು ಅನುಭವಿಸಿದ ಸಾಮಾಜಿಕ ಲೇಖಕ. ತನ್ನ ಹುಟ್ಟೂರಿನಲ್ಲಿ ಆಳುವವರ ದಬ್ಬಾಳಿಕೆ ಅತಿಯಾಗಿ ಅಲ್ಲಿನ ಸೇನಾಧಿಕಾರಿ ಮಾರಿಯೋ ಲೌಸ ಅವರ ಪೌರತ್ವ ಪೆರುವಿನ “ಭೌಗೋಳಿಕ ಆಕಸ್ಮಿಕ” (geographical accident) ಆಗಿದ್ದು ದೇಶದ ಪೌರತ್ವವನ್ನು ರದ್ದು ಗೊಳಿಸ ಬೇಕೆಂದು ಸರಕಾರಕ್ಕೆ ಶಿಫಾರಸ್ಸು ಮಾಡಿದಾಗ ಅಪಾಯ ಮನಗಂಡ ಈ ಲೇಖಕ ಸ್ಪೇನ್ ದೇಶದ ಪೌರತ್ವ ಪಡೆದು ಅದರ ಜೊತೆಗೆ ಪೆರುವಿನ ಪುರತ್ವವನ್ನೂ ಉಳಿಸಿಕೊಂಡರು. ಪ್ರಬಂಧಗಳು, ನಾಟಕ, ಸಾಹಿತ್ಯ ಮತ್ತು ರಾಜಕೀಯ ಹೊರಾಟಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿರುವ ಈ ಲೇಖಕ ಅಮೆರಿಕೆಯ ಮತ್ತು ಅಇರೋಪ್ಯ ದೇಶಗಳ ವಿಶ್ವ ವಿದ್ಯಾಲಯಗಳಿಗೆ ಅತಿಥಿ ಪ್ರಾಧ್ಯಾಪಕರಾಗಿ, ಭಾಷಣಕಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಈ ರೀತಿಯ ಹಲವು ದೇಶಗಳ ಬಿಡುವಿಲ್ಲದ  ಪರ್ಯಟನದಿಂದ ಬರವಣಿಗೆಗೆ ತೊಡಕಾಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ ಉತ್ತರವಾಗಿ  “ವಾಸ್ತವವಾಗಿ ವಿವಿಧ ಭಾಷೆ ಗಳೊಂದಿಗಿನ ತಮ್ಮ ಬದುಕು ತಮ್ಮ ಅರಿವನ್ನು ಹೆಚ್ಚಿಸಿದ್ದು, ಒಂದೇ ಭಾವನೆಯನ್ನು ಹೇಗೆ ವಿವಿಧ ಭಾಷೆಗಳು ವ್ಯಕ್ತಪಡಿಸುತ್ತವೆ ಎನ್ನುವ ಸೂಕ್ಷ್ಮತೆ ಸಹ ತನಗೆ ಕಾಣಲು ಸಿಗುತ್ತದೆ, ಹಾಗೆಯೇ ಮಾತೃ ಭಾಷೆಯೊಂದಿಗಿನ ನನ್ನ ನಂಟು ಇತರೆ ಭಾಷೆ ಗಳೊಂದಿಗಿನ ಒಡನಾಟದಿಂದ ಇನ್ನಷ್ಟು ಶ್ರೀಮಂತ ಗೊಂಡಿದೆ” ಎಂದು ಹೇಳಿದರು. ಸಂದರ್ಶನದ ವೇಳೆ ಹೇಳಿದ ಈ ಮಾತುಗಳು ಗಡಿಬಿಡಿಯ ಅಂತಾರಾಷ್ಟ್ರೀಯ ಬದುಕು ಈ ಲೇಖಕನ ಸಂಸ್ಕಾರವನ್ನು ಹೇಗೆ ಶ್ರೀಮಂತ ಗೊಳಿಸಿತು ಎನ್ನುವ ಸತ್ಯವನ್ನು ನಮಗೆ ತೋರಿಸುತ್ತದೆ.

ಲ್ಯಾಟಿನ್ ಅಮೆರಿಕಾದ ದೇಶಗಳು ಕಿತ್ತು ತಿನ್ನುವ ಬಡತನದೊಂದಿಗೆ ಮಾದಕ ದ್ರವ್ಯಗಳ ಮಾರಾಟ ಮತ್ತು ದಂಧೆಯನ್ನು ನಡೆಸುವ ಭೂಗತ ದೊರೆಗಳ ದಬ್ಬಾಳಿಕೆ ಯಿಂದಲೂ ತತ್ತರಿಸುತ್ತಿದೆ. ಈ ಹಾವಳಿಯನ್ನ ತಡೆಯಲು ಸರಕಾರಗಳು ಕೋಟ್ಯಂತರ ಡಾಲರುಗಳನ್ನು ಇವರ ವಿರುದ್ಧ ದ ಹೋರಾಟಕ್ಕೆ ವ್ಯಯಿಸಿದರೂ ಆ ಹಣ ಲಂಚಕೋರ ಸೇನಾಧಿಕಾರಿಗಳ, ರಾಜಕಾರಣಿಗಳ ಪಾಲಾಗುವುದನ್ನು ಕಂಡ ಈ ಲೇಖಕ ಸರಕಾರದ ಈ ನೀತಿಯನ್ನು ವಿರೋಧಿಸಿ ಹಣವನ್ನ ಶಸ್ತ್ರಗಳನ್ನು ಖರೀದಿಸಲು ವ್ಯಯಿಸದೆ ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವ ಅಭಿಯಾನವನ್ನು ಆರಂಭಿಸಲು ಮತ್ತು ಮಾದಕ ದ್ರವ್ಯವ್ಯಸನಿಗಳ ಚಿಕಿತ್ಸೆಗೆ ಖರ್ಚು ಮಾಡಲು ಕರೆ ನೀಡಿದರು. ಸೇನಾಧಿಕಾರಿಗಳ ಮತ್ತು ರಾಜಕಾರಣಿಗಳ ವಿಷವರ್ತುಲ ಇವರ ಮಾತುಗಳನ್ನು ಕೇಳುವ ಗೋಜಿಗೆ ಹೋಗಲಿಲ್ಲ.

ಲೇಖಕರೂ ಸಹ ಸಾಮಾನ್ಯ ಜನರಂತೆ ಪೌರರಾಗಿದ್ದು ಜನರ ಹೋರಾಟ ಮತ್ತು ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವ ನೈತಿಕ ಹೊಣೆ ಅವರ ಮೇಲೆ ಇರಬೇಕು ಎಂದು ನೊಬೆಲ್ ಪ್ರಶಸ್ತಿ ಪಡೆಯುವ ಮುನ್ನ ನಡೆದ ಚರ್ಚೆಯಲ್ಲಿ ಹೇಳಿದ್ದರು ಲೌಸ. ೧೯೯೦ ರಲ್ಲಿ ಆಲ್ಬರ್ಟೋ ಫುಜಿಮೋರಿ ವಿರುದ್ಧ ಸೋತ ಈ ಲೇಖಕ ಮತ್ತೆ ರಾಜಕೀಯದ ಕಡೆ ತಲೆಹಾಕದೆ ಪೂರ್ಣ ಸಮಯ ಬರವಣಿಗೆಯಲ್ಲಿ ತೊಡಗಿಸಿಕೊಂಡರು. ಸರ್ವಾಧಿಕಾರಿಗಳನ್ನು ಚುನಾವಣೆಯಲ್ಲಿ ಬಗ್ಗು ಬಡಿಯದಿದ್ದರೇನಂತೆ ತಮ್ಮ ಪ್ರಖರ ಬರಹವನ್ನೇ ಅಸ್ತ್ರವನ್ನಾಗಿ ಉಪಯೋಗಿಸಿ ಲೇಖನಿಯೂ ಓಟು ಗಳಷ್ಟೇ ಪರಿಣಾಮಕಾರಿ ಎಂದು ತೋರಿಸಿದರು. “ಪದಗಳೇ ಕೃತ್ಯಗಳು…. ಬರಹದ ಮೂಲಕ ಚರಿತ್ರೆಯನ್ನು ಬದಲಿಸಲು ಸಾಧ್ಯ” ಎಂದು ಬಲವಾಗಿ ನಂಬಿದವರು. ಲ್ಯಾಟಿನ್ ಅಮೆರಿಕಾದಲ್ಲಿ ಎಲ್ಲೇ ಶೋಷಣೆ ಅನ್ಯಾಯ ನಡೆದರೂ ಅಲ್ಲಿಗೆ ಧಾವಿಸುವ ಈ ಲೇಖಕ ತಾವು ಕಂಡಿದ್ದನ್ನು ಬರೆದು ನೀಚ ಕೃತ್ಯಗಳನ್ನು ಬಯಲಿಗೆಳೆಯುವ ಸಾಹಸಕ್ಕೆ ಕೈ ಹಾಕುತ್ತಾರೆ. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕ್ರೌರ್ಯ ಸಹ ಇವರ ಲೇಖನಿಯ ಮೊನಚಿಗು ಸಿಕ್ಕು ಸಮಾಜದ ಕಣ್ಣು ತೆರೆಸುವಂತೆ ಮಾಡುತ್ತದೆ ಇವರ ಬರಹಗಳು. ಇಂಥದ್ದೇ ಒಂದು ಘಟನೆ ಮತ್ತೊಂದು “ಡೊಮಿನಿಕನ್ ರೆಪಬ್ಲಿಕ್”. ಅಲ್ಲಿನ ಸರ್ವಾಧಿಕಾರಿ ರಾಫೆಲ್ ಟ್ರೂಜಿಲೋ ೧೯೩೦ ರಿಂದ ೧೯೬೧ ರವರೆಗಿನ ತನ್ನ ಆಳ್ವಿಕೆಯಲ್ಲಿ ತನ್ನ ಮಗಂದಿರೊಂದಿಗೆ ಮಹಿಳೆಯರ ಮೇಲೆ ಅತ್ಯಾಚಾರ ದೌರ್ಜನ್ಯವನ್ನು ಪ್ರತಿರೋಧವಿಲ್ಲದೆ ನಡೆಸುತ್ತಿದ್ದ. ಎಷ್ಟೋ ಜನ ತಮ್ಮ ಹೆಣ್ಣು ಮಕ್ಕಳನ್ನು ಈ ಸರ್ವಾಧಿಕಾರಿ ಮತ್ತು ಮಗಂದಿ ರಿಗೆ “ಉಡುಗೊರೆ” ಯಾಗಿ ಕೊಡುತ್ತಿದ್ದರಂತೆ ಭಯ ಬಿದ್ದು. (ಉತ್ತರ ಭಾರತದ ಠಾಕೂರ ಜಮೀನ್ದಾರರಿಗೆ ಹೆದರಿ ಬಡ ರೈತರು ಬದುಕಿದಂತೆ).  ರಾಫೆಲೋ ನ ದೌರ್ಜನ್ಯವನ್ನು “the feast of the goat” ಪುಸ್ತಕದಲ್ಲಿ ಸವಿವರವಾಗಿ ವರ್ಣಿಸಿದ್ದಾರೆ ಈ ಲೇಖಕ. ಇದೇ ತೆರನಾದ ಮಹಿಳೆಯರ ಮೇಲಿನ ದೌರ್ಜನ್ಯ ಇರಾಕಿನ ಸದ್ದಾಮ್ ಹುಸೇನರ ಮಕ್ಕಳೂ ಬೀದಿಯಲ್ಲಿ ಕಂಡ ಸುಂದರ ಹೆಣ್ಣುಮಕ್ಕಳನ್ನು ಎಗರಿಸಿಕೊಂಡು ಹೋಗುತ್ತಿದ್ದರು ಎಂದು ಈ ಲೇಖಕರು ಹೇಳಿದರೂ  ( ಅಮೇರಿಕ ನಿಯಂತ್ರಿತ ಮಾಧ್ಯಮಗಳ ಅಪಪ್ರಚಾರವೂ ಆಗಿರಲಿಕ್ಕೆ ಸಾಕು ) “ಕ್ರೌರ್ಯ ಯಾವುದೇ ಸರ್ವಾಧಿಕಾರಿಗಳ ಆಡಳಿತದಲ್ಲೂ ಸಮನಾಗಿರುತ್ತದೆ” ಎನ್ನುವ ಅಭಿಪ್ರಾಯ “ಮಾರಿಯೋ ವರ್ಗಾಸ್ ಲೌಸ” ಅವರದು. ಕೊನೆಯದಾಗಿ ಸಾಹಿತ್ಯದ ಬಗ್ಗೆ ವರ್ಗಾಸ್ ಅವರ, ವಿಶೇಷವಾಗಿ ನಮಗೆ ಅನ್ವಯವಾಗುವ,   ಮುತ್ತಿನಂಥ ಮಾತುಗಳು…

“I think that literature has the important effect of creating free, independent, critical citizens who cannot be manipulated.”

 

 

ಜೋಕೆ, ಅಂಡು ಕಂಡಲ್ಲಿ ಗುಂಡು

ಕಿತಾಪತಿ ಜಾಸ್ತಿ ಆದಾಗ ಕಿಡಿಗೇಡಿಗಳ ವಿರುದ್ಧ  ಪೊಲೀಸರು ಕಂಡಲ್ಲಿ ಗುಂಡು ಪ್ರಯೋಗಿಸುವುದುಂಟು. ಅಮೆರಿಕೆಯ ನಗರವೊಂದರಲ್ಲಿ ಬೇರೆಯದೇ ಆದ ಘಟನೆ. ಇಲ್ಲಿ ಅಂಡಿಗೆ ಗುಂಡು. ಅಂಡುಗಳ ಪ್ರದರ್ಶನದಿಂದ ರೋಸಿ ಹೋದ ನನಗೆ ಈ ರೋಚಕ ಸುದ್ದಿ ಓದಿ ಒಂದು ರೀತಿಯ ಆನಂದ. ಗುಂಡು ಗಳನ್ನು ಹಾರಿಸಿ ತನ್ನ ಹತಾಶೆ ಹೊರ ಹಾಕಿದ “ಕೆನ್ನೆತ್ ಬಾಂಡ್ಸ್” ಕೊನೆಗೂ ಆದ ಜೇಮ್ಸ್ ಬಾಂಡ್. ಅಂಡುಗಳ ವಿರುದ್ಧ ತನ್ನದೇ ಆದ ಶೈಲಿಯಲ್ಲಿ ಸಮರ ಸಾರಿದ. ಗುಂಡೇಟು ತಿಂದ ಬಡಪಾಯಿ ಹುಡುಗರು ಆಸ್ಪತ್ರೆಯಲ್ಲಿ ಚೇತರಿಸಿ ಕೊಳ್ಳುತ್ತಿದ್ದಾರೆ. ೧೬, ೧೭ ರ ಪ್ರಾಯದ ಹುಡಗರೊಂದಿಗೆ ತಮ್ಮ ಪ್ಯಾಂಟ್ ಸರಿಯಾಗಿ ತೊಟ್ಟು ಕೊಳ್ಳಲು ವಿನತಿಸಿದ ೪೫ ರ ಪ್ರಾಯದ  ಬಾಂಡ್ಸ್. ಮಾಗಿದ ಹದಿಹರೆಯ, ಅದರ ಮೇಲೆ ಮೊಂಡು ಕಿವುಡು ಬೇರೆ. ಹುಡಗರು ಸೊಪ್ಪು ಹಾಕಲಿಲ್ಲ. ಸಿಟ್ಟಿಗೆದ್ದ ಬಾಂಡ್ಸ್ ತನ್ನ ಜೇಬಿನಲ್ಲಿದ್ದ ಆಟೋ ಮ್ಯಾಟಿಕ್ ಗನ್ ಹೊರತೆಗೆದು ನೆಟ್ಟೆ ಬಿಟ್ಟ ಗುರಿಯ, ಚಡ್ಡಿಯೊಳಗಿಂದ ಇಣುಕುತ್ತಿದ್ದ ಗಿರಿಗಳ ಮೇಲೆ. ಎದ್ನೆಪೋ, ಸತ್ನೆಪೋ ಎನ್ನುತ್ತಾ ಹುಡುಗರು ಮೇಲೇರಿಸಿಕೊಳ್ಳಲಾರದ ಪ್ಯಾಂಟು ಗಳನ್ನು ಮೇಲೇರಿಸಿಕೊಳ್ಳಲು ಹೆಣಗುತ್ತಾ. ಬಾಂಡ್ಸ್ ಮತ್ತಷ್ಟು ಗುಂಡುಗಳನ್ನು ಹಾರಿಸಿದ. ನಮಗೆ ಬಾಂಡ್ಸ್ ನ ಈ ಕೃತ್ಯ ಸ್ವಲ್ಪ ಅತಿಯಾಗೇ ತೋರಿದರೂ ಕೆಲವೊಮ್ಮೆ ಅಸಹನೆ ಮೇಲುಗೈ ಸಾಧಿಸುತ್ತದೆ ಅಸಹ್ಯ ಹುಟ್ಟುವ ಫ್ಯಾಶನ್ ಅಂಡನ್ನು ತೋರಿಸುವ ಮಟ್ಟಕ್ಕಿಳಿದಾಗ.  ಭೂಮಿಯ ಗುರುತ್ವಾಕರ್ಷಣ ಶಕ್ತಿಯ ಸಾಮರ್ಥ್ಯವನ್ನು ಪರೀಕ್ಷಿಸಲೆಂದೇ ಈ ಹುಡುಗರು ತೊಡುತ್ತಾರೋ ಏನೋ ಪ್ಯಾಂಟುಗಳನ್ನು. precarious ಆಗಿ ಹಿಂಬದಿಯಿಂದ ನೇತಾಡುವ ಪ್ಯಾಂಟು ಯಾವುದೇ ಕ್ಷಣದಲ್ಲೂ , ನಿಮಿಷದಲ್ಲೂ ಧರೆಗೆ ಶರಣಾಗುವುದು ಎಂದು ತೋರುತ್ತದೆ ನೋಡುಗರ ಕಣ್ಣುಗಳಿಗೆ.      

ನನ್ನ ತಂಗಿಯರ ಇಬ್ಬರು ಗಂಡು ಮಕ್ಕಳು ಮತ್ತು ಸೋದರ ಮಾವನ ಮಗನೊಬ್ಬ ಈ ರೀತಿಯ ಅಂಡುಗಳ ಪ್ರದರ್ಶನಕ್ಕೆ ಶರಣಾದ ಯುವ ಸಮೂಹ. ಯಾಕ್ರೋ ಈ ರೀತಿಯ ಹೊಲಸು, ಕಳಪೆ ಫ್ಯಾಶನ್ ಗೆ ಮಾರು ಹೋಗುತ್ತೀರಾ ಎಂದು ಸಿಡುಕಿದಾಗ ಬಹಳ ಕಷ್ಟ ಪಟ್ಟು ಮೇಲೆ ಎಳೆಯಲು ವ್ಯರ್ಥ ಪ್ರಯತ್ನ ನಡೆಸುತ್ತಾರೆ. ಪರಿಚಯಸ್ಥರೊಬ್ಬರು ಹೇಳಿದರು, ಬೈದಾಗ ಪ್ಯಾಂಟ್ ಮೇಲೆರಿಸುವಂತೆ ಅವರು ನಾಟಕ ಮಾತ್ರ ಮಾಡೋದು, ತುದಿಗಾಲಿನಲ್ಲಿ ನಿಂತು ಪ್ಯಾಂಟ್ ಏರಿಸುವಂತೆ ನಮಗೆ ತೋರುತ್ತದೆಯೇ ಹೊರತು ಮೇಲೆ ಏರಿದ್ದು ಅವರ ತುದಿಗಾಲು ಮಾತ್ರ, ಪ್ಯಾಂಟ್ ಅಲ್ಲ ಎಂದು ಉರಿಯುತ್ತಾ ನುಡಿದರು. 

ಹೆಣ್ಣು ಮೈ ತೋರಿಸಿ ಕಾರಿನ ಟಯರು ಗಳನ್ನೂ, ಪುರುಷರ ಒಳ ಉಡುಪುಗಳನ್ನೂ ಪ್ರೊಮೋಟ್ ಮಾಡಲು ತಯಾರಿರುವಾಗ, ಅದನ್ನು ಮೆಚ್ಚಿ ಚಪ್ಪಾಳೆ ತಟ್ಟುವ ಸಮೂಹವೂ ಇರುವಾಗ ನಮ್ಮ ಹಿಂಬದಿಯ ಪ್ರದರ್ಶನದಿಂದ ಆಗುವ ನಷ್ಟವಾದರೂ ಏನು ಎಂದು ಇವರಿಗೆ ಅನ್ನಿಸಿರಲಿಕ್ಕೂ  ಸಾಕು.    

ನಾನು ಫ್ಯಾಶನ್ ವಿರೋಧಿಯಲ್ಲ. ಆದರೆ ಎಲ್ಲಕ್ಕೂ ಒಂದು ಮಿತಿ ಇದ್ದೇ ಇರುತ್ತದೆ. . ಒಂದು ಕಡೆ ಹದಿಹರೆಯದ ಹುಡುಗರ ಕಿರಿಕ್ ಅನ್ನಿಸುವ “ಪಿರ್ರೆ” ಗಳ ಪ್ರದರ್ಶನ, ಮತ್ತೊಂದೆಡೆ “ಚಿಯರ್ ಗರ್ಲ್ಸ್” ಗಳ ಗರಿಷ್ಟ ಅಂಗ ಸೌಷ್ಠವ ಗಳ ಅರೆನಗ್ನ ಪ್ರದರ್ಶನ. ಇವೆರಡರ ಮತ್ತು ಇಂಥವೇ unsolicited ಮೈಮಾಂಸ ತೋರಿಸುವ ಫ್ಯಾಶನ್ ಕಾರಣ ಉಲ್ಲಾಸೀ ಅಥವಾ ದಾಂಪತ್ಯ ಬದುಕಿಗೆ ಬೇಕಾದ ಶೃಂಗಾರ ಭಾವನೆ ಎಲ್ಲಿ ಮಾಯಾವಾಗಿ ಬಿಡುತ್ತೋ ಅನ್ನೋ ಚಿಂತೆ ನಮ್ಮನ್ನು ಕಾಡಿದರೆ ಆ ಚಿಂತೆ well founded.

ಅಡಗಿ ಕೂತಿದ್ದ ಭಾಷೆ

Ethnologue ಎನ್ನುವ ಭಾಷೆಗಳ ಅಧ್ಯಯನಕ್ಕಾಗೇ ಇರುವ ಪತ್ರಿಕೆ ಪ್ರಕಾರ ಇದುವರೆಗೂ ನಮಗೆ ಗೊತ್ತಿರುವ ವಿಶ್ವದ ಭಾಷೆಗಳು ೬೯೦೯. ಈಗ ಭಾರತದಿಂದಲೇ ಮತ್ತೊಂದು ಭಾಷೆಯ ಪ್ರವೇಶವಾಗಿದೆ ಅರುಣಾಚಲ ಪ್ರದೇಶದಿಂದ. National Geographic’s Enduring Voices ನವರು ನಡೆಸಿದ ಅಧ್ಯಯನದಿಂದ ಈ ರೋಚಕ ಸಂಗತಿ ತಿಳಿದು ಬಂತು. “ಕೋರೋ” ಎಂದು ಕರೆಯಲ್ಪಡುವ ಈ ಭಾಷೆಯನ್ನು ಕೇವಲ ೮೦೦ ರಿಂದ ೧೨೦೦ ಜನ ಮಾತನ್ನಾಡುತ್ತಾರಂತೆ. ಇಂಥದ್ದೇ ಮತ್ತೊಂದು ಅಪರೂಪದ “ಬೊ” ಎನ್ನುವ ಅಂಡಮಾನ್ ದ್ವೀಪದ ಭಾಷೆ ಆ ಭಾಷೆಯನ್ನಾಡುವ  ಕೊನೆಯ ವ್ಯಕ್ತಿ ಕಳೆದ ವರ್ಷ ಸಾಯುವುದರೊಂದಿಗೆ ಅವನೊಂದಿಗೇ ಸ್ವರ್ಗ ಸೇರಿಕೊಂಡಿತು. ಧಾರ್ಮಿಕವಾಗಿ ಮಾತ್ರ ಉಪಯೋಗಿಸಲ್ಪಡುತ್ತಿದ್ದ ಸಂಸ್ಕೃತವೂ ಅದೇ ದಾರಿ ಹಿಡಿಯಬಹುದು ಎನ್ನುವ ಆತಂಕವಿತ್ತು ಮೊದಲು. 

ಕೋರೋ ಭಾಷೆ ಆಡುವ ಯುವಜನರು ಕ್ರಮೇಣ ಹಿಂದಿ ಮತ್ತು ಆಂಗ್ಲ ಭಾಷೆಗಳ ಕಡೆ ಒಲವನ್ನು ತೋರಿಸಲು ತೊಡಗಿದ್ದು ಇನ್ನು ಕೆಲವೇ ವರ್ಷಗಳಲ್ಲಿ ಅದೂ ಸಹ  “ಬೊ” ಭಾಷೆಯ ದಾರಿ ಹಿಡಿದರೆ ಅಚ್ಚರಿ ಪಡಬೇಕಿಲ್ಲ. ಮೇಲೆ ಹೇಳಿದ ಭಾಷೆ ಯೊಂದಿಗೆ ಅರುಣಾಚಲ ಪ್ರದೇಶದಲ್ಲಿ ಸುಮಾರು ೧೨೦ ಭಾಷೆಗಳಿವೆಯಂತೆ. “ಕೋರೋ” ಭಾಷೆ “ಅಕಾ” ಎನ್ನುವ ಮತ್ತೊಂದು ಅರುಣಾಚಲದ ಭಾಷೆಯ ರೂಪವೆಂದೇ ಮೊದಲಿಗೆ ಊಹಿಸಲಾಗಿತ್ತು. ಏಕೆಂದರೆ ಕೋರೋ ಮತ್ತು  ಭಾಷೆಯನ್ನಾಡುವ ಜನ ವೇಷ ಭೂಷಣ ಮತ್ತು ಅಡುಗೆ ಮುಂತಾದುವುಗಳಲ್ಲಿ ಒಂದೇ ರೀತಿಯ ಆಚರಣೆಗಳನ್ನು ಹೊಂದಿದ್ದರು ಮತ್ತು ಭಾಷೆಗಳು ಬೇರೆ ಬೇರೆಯದಾದರೂ ಅವರೊಳಗೆ (ಭಾಷಾಂತರ) ವಿವಾಹಗಳು ಏರ್ಪಡುವುದೂ ಉಂಟು. ಪ್ರೇಮಿಸಲು ಭಾಷೆಯ ಅವಶ್ಯಕತೆ ಅಲ್ಲ ಇರೋದು ಎನ್ನುವುದಕ್ಕೆ “ಕೋರೋ” ಮತ್ತು “ಬೊ” ಭಾಷಿಕರೇ ಸಾಕ್ಷಿ ನಿಲ್ಲುವರು, ಅಲ್ಲವೇ?  ಭಾಷೆಗಳು ಎಷ್ಟೊಂದು ಸ್ವಾರಸ್ಯವೆಂದರೆ ದ್ರಾವಿಡ ಭಾಷೆಗಳು ಭಾರತದಲ್ಲಿ ಮಾತ್ರ ಎಂದು ಅರಿತಿದ್ದ ನಮಗೆ ಆಫ್ಘಾನಿಸ್ತಾನದ ಪ್ರಾಂತ್ಯವೊಂದರಲ್ಲಿ ಬ್ರಾಹೂಯಿ ಎನ್ನುವ ಭಾಷೆ ದ್ರಾವಿಡ ಕುಟುಂಬಕ್ಕೆ ಸೇರಿದ್ದು ಎಂದು ತಿಳಿದಾಗ ವಿಶ್ವ ಭಾವನಾತ್ಮಕವಾಗಿ ನಿಜಕ್ಕೂ ಕುಬ್ಜ ಎಂದು ತೋರಿತು.

೬೯೦೯ ಭಾಷೆಗಳಲ್ಲಿ ಸುಮಾರು ಅರ್ಧದಷ್ಟು ಸಂಖ್ಯೆಯ ಭಾಷೆಗಳು ಕೊನೆ ಯುಸಿರೆಳೆಯುತ್ತಿವೆ ಎನ್ನುವ ಆಘಾತಕಾರಿ ಸತ್ಯವನ್ನೂ National Geographic’s Enduring Voices ಸಂಸ್ಥೆ ಹೊರಗೆಡಹಿದೆ. ಕೋರೋ ಭಾಷೆ ಲಿಪಿಯಿಲ್ಲದ ಭಾಷೆ, ಕೊಂಕಣಿ ಮತ್ತು ತುಳು ರೀತಿ.   

ಸ್ವಾರಸ್ಯ(?) ವೆಂದರೆ ಈಶಾನ್ಯ ಭಾರತದ ಅರುಣಾಚಲ ಪ್ರದೇಶಕ್ಕೆ  ಹೋಗಿ ಆ ಹೊಸ ಭಾಷೆಯ ಸೊಗಡನ್ನು ಕೇಳಿ ನೋಡಿ ಆನಂದಿಸೋಣ ಎಂದರೆ ಅಲ್ಲಿಗೆ ಹೋಗಲು “ವಿಶೇಷ ಅನುಮತಿ” permit ಬೇಕು. ನಾವೆಲ್ಲಾ ಟೀಕಿಸಲು, ದೇಶ ವಿರೋಧಿಗಳ ರಾಜ್ಯ ಎಂದು ಹಳಿಯುವ ಕಾಶ್ಮೀರಕ್ಕೆ ಹೋಗಲು ನಮಗೆ ಯಾವುದೇ ಪರವಾನಗಿ ಬೇಡ, ಕಾಶ್ಮೀರಿಗಳಂತೆಯೇ ಭಾರತೀಯರಾದರೆ ಸಾಕು. ಪರವಾನಗಿ ಪಡೆಯಬೇಕಾದ ಮತ್ತೆರಡು ರಾಜ್ಯಗಳೆಂದರೆ “ಮಿಜೋರಾಂ” ಮತ್ತು “ನಾಗಾಲ್ಯಾಂಡ್”.

ಭಾರತದ ವಿಜಯ

ಕೊನೆಗೂ ಬಂತು ಆ ದಿನ. ಆಂಗ್ಲ ಭಾಷೆಯಲ್ಲಿ D-Day. ತಮಗೆ ನಿರಾಸೆಯಾಗದಿರಲಿ ಎಂದು ಎರಡೂ ಕಡೆಯವರು ಆಶಿಸಿದ, ಬೇಡಿಕೊಂಡ, ಹರಕೆ ಹೊತ್ತು ಕೊಂಡ ದಿನ. ನೂರಾರು ವರ್ಷಗಳ ವಿವಾದಕ್ಕೆ, ವಿಶಾಲವಾದ ಭೂಮಿಯ ಜೊತೆ ನಮ್ಮೆಲ್ಲರನ್ನೂ ಸೃಷ್ಟಿಸಿದ, ಮನುಷ್ಯರಂತೆ ಬದುಕು ಎಂದು ತಾಕೀತಿನೊಂದಿಗೆ ಕಳಿಸಿದ, ಎಲ್ಲರೂ ಆರಾಧಿಸುವ ಪರಮಾತ್ಮನಿಗೆ  ಮಂದಿರವೋ ಮಸೀದಿಯೋ ಎನ್ನುವ ತಕಾರಾರಿಗೆ ಸಿಕ್ಕಿತು ಮುಕ್ತಿ. ಅದೂ ಸಂಕೀರ್ಣಮಯ ಮುಕ್ತಿ. ಸಂಕೀರ್ಣ ಸಮಸ್ಯೆಗೊಂದು ಅಷ್ಟೇ ಸಂಕೀರ್ಣವಾದ ಪರಿಹಾರ. ಅಯೋಧ್ಯೆ, ದೇಶದ ಜನರನ್ನು ಬೇರ್ಪಡಿಸಿದ್ದು ಮಾತ್ರವಲ್ಲ ದೇಶವಾಸಿಗಳು ತಮ್ಮ ಸಮಯ, ಶ್ರಮ, ಸಂಪತ್ತು ಈ ವಿವಾದದ ಹಿಂದೆ ಹೂಡಿ, ಕಚ್ಚಾಡಿ, ಬಡಿದಾಡಿ “

ವಸುಧೈವ ಕುಟುಂಬಕಂ” ಎಂಬುದು ಪುಸ್ತಕದ ಬದನೇಕಾಯಿ ಮಾತ್ರ ಎಂದು ಜಗತ್ತಿಗೆ ಸಾರಿದ ಸಮಸ್ಯೆ. ಬದುಕು, ಬದುಕಲು ಬಿಡು (ಜಿಯೋ ಔರ್ ಜೀನೇದೋ) ಎನ್ನುವ ಸಮೀಕರಣಕ್ಕೆ ಒಲ್ಲೆ ಎಂದು ಪಟ್ಟು ಹಿಡಿದ ವಿವಾದ. ಮೂರು ನ್ಯಾಯಾಧೀಶರುಗಳ ಪೀಠ ಕೊನೆಗೂ ಕೊಟ್ಟಿತು ತೀರ್ಪು, ಎರಡೆಕರೆ ೭೦ ಗುಂಟೆ ಮೂರುಭಾಗ ಮಾಡಿಕೊಂಡು ಭಜನೆ, ಹರಕೆ, ಏಕದೇವೋಪಾಸನೆ ಮಾಡಿಕೊಳ್ಳಿ ಎಂದು. ಆದರೆ ಈ ಗಲಾಟೆಯಲ್ಲಿ ರಾಮ ಮತ್ತು ರಹೀಮರು ನಿಮ್ಮ ಭಜನೆಯೂ ಬೇಡ, ಭಕ್ತಿಯೂ ಬೇಡ ಎಂದು ಸದ್ದಿಲ್ಲದೇ ಕಾಲು ಕಿತ್ತಿದ್ದು ಮಾತ್ರ ಯಾರೂ ಗಮನಿಸಲೇ ಇಲ್ಲ.

ಭಾರತ ಜಾತ್ಯಾತೀತ ರಾಷ್ಟ್ರ. ಆ ಹೆಗ್ಗಳಿಕೆಗೆ ನ್ಯಾಯವೆಸಗಲು ಹೆಣಗಿದ ತೀರ್ಪು ಇದು. ಇದರಲ್ಲಿ ಯಾರಿಗೂ ವಿಜಯವಿಲ್ಲ. ಆದರೆ ವಿಜಯ ಮಾಲೆ ತಾಯಿ ಭಾರತಿಗೆ ಎಂದು ಸಮಾಧಾನ. ಆದರೂ ಕೆಲವು ಕಿಡಿ ಗೇಡಿಗಳು ಸರಕಾರದ ಕಟ್ಟುನಿಟ್ಟಾದ ನಿರ್ದೇಶನದ ನಡುವೆಯೂ “V” ಪ್ರದರ್ಶಿಸುತ್ತಾ ಏನೋ ಸಾಧಿಸಿದವರಂತೆ ಫೋಸ್ ಕೊಟ್ಟರು. ದೇವರ ಹೆಸರಿನಲ್ಲಿ ರಾಜಕಾರಣ ಮಾಡಿ ಹೊಟ್ಟೆ ಹೊರೆದು ಕೊಳ್ಳುವವರಿಗೆ ಯಾವ ಸಂದಿಗ್ಧ ಪರಿಸ್ಥಿತಿಯೂ ವಿಜಯೋಲ್ಲಸವೇ. ಇಂದು ಬೆಳಗ್ಗಿನ ಹಲವು ಪತ್ರಿಕೆಗಳನ್ನು ನೋಡಿದ ನನಗೆ ಅನ್ನಿಸಿದ್ದು ಈಗಲೂ ಮಾಧ್ಯಮಕ್ಕೆ ಭಾರತೀಯರ ನಡುವೆ ಕಂದಕ ತೊಡುವುದೇ ಇವರ ಕಾಯಕ ಎಂದು. ಕರಾವಳಿಯ ಗುಡ್ಡದ ಮೇಲೊಂದರಿಂದ  ಪ್ರಕಾಶಿತವಾಗುವ ಪತ್ರಿಕೆಯಾಗಲಿ, ಸಮಸ್ತ ಕನ್ನಡಿಗರ ಹೆಮ್ಮೆ ಎಂದು ಘೋಷಣೆ ಹೊತ್ತ ಪತ್ರಿಕೆಯಾಗಲಿ ತಮ್ಮ screaming headlines ಮೂಲಕ ಒಂದು ಸಮಾಜಕ್ಕೆ ಸಂದ ವಿಜಯವೆಂದೇ ಪ್ರತಿಬಿಂಬಿಸಿದವು. ಈ ತೆರನಾದ, ಉದ್ರೇಕಿಸುವ ಪತ್ರಿಕೆಗಳ ತಲೆಬರಹಗಳನ್ನು ನಿರ್ಲಕ್ಷಿಸಿ ನ್ಯಾಯಾಲಯದ  ತೀರ್ಪನ್ನು ತಮ್ಮ ಸಂಸ್ಕೃತಿ ತಮ್ಮಿಂದ ಬಯಸುವ characteristic poise ಜೊತೆಗೆ “ಸಬರ್” (ಸಂಯಮ) ಅನ್ನು ಮೋಹಕವಾಗಿ ಪ್ರದರ್ಶಿಸುವ ಮೂಲಕ ಮುಸ್ಲಿಂ ಸಮಾಜದ ಬಂಧುಗಳು ಮಸೀದಿಗಿಂತ ದೇಶ ದೊಡ್ಡದು ಎಂದು ಜಗತ್ತಿಗೆ ತೋರಿಸಿಕೊಟ್ಟಿದ್ದು ಸಂತಸಕರ.

ದೇಶದ ಜನಸಂಖ್ಯೆಯ ಶೇಕಡಾ ೭೭ ಭಾಗ ಇಪ್ಪತ್ತಕ್ಕೂ ಕಡಿಮೆ ರೂಪಾಯಿಯ ಆದಾಯದ ಮೇಲೆ ಕಳೆಯುತ್ತಾರಂತೆ. ಒಪ್ಪೊತ್ತಿನ ಅನ್ನಕ್ಕಾಗಿ ಪರದಾಡುವವನಿಗೆ ತನ್ನ ಹಸಿದ ಹೊಟ್ಟೆಗೆ ಊಟ ಯಾವ ಕಡೆಯಿಂದ ಬರಬಹುದು ಎನ್ನುವ ಕಾತುರ, ನಿರೀಕ್ಷೆ.  ದೇಶವನ್ನು ಕಿತ್ತು ತಿನ್ನುತ್ತಿರುವ ಸಾಮಾಜಿಕ ಅಸಮಾನತೆ, ಹಸಿವು, ಲಂಚ, ಕೊಲೆ ಸುಲಿಗೆ ಬಗ್ಗೆ ಮೇಲಿನ ಸಮಸ್ಯೆಗಳಿಗೆ ತೋರಿಸಿದ ಕಾಳಜಿ, ಕಾತುರ ತೋರಿದ್ದಿದ್ದರೆ ಪಕ್ಕದ ಚೀನಾ ಅಥವಾ ಮಲೇಷ್ಯ ದಂಥ ದೇಶಗಳ ಪ್ರಗತಿ ಕಂಡು ಕರುಬುವ ಅವಶ್ಯಕತೆ ಇರಲಿಲ್ಲ. ಏನೇ ಆಗಲಿ ಈ ದೇಶದ ನೆಮ್ಮದಿ ಕೆಡಿಸಿದ್ದ ಸಮಸ್ಯೆಗೆ ಒಂದು ಪರಿಹಾರ ಬಂತು ಅಲ್ಲಾಹನ ಊರಿನಿಂದ (ಇಲಾಹಾಬಾದ್). ಈ ತೀರ್ಪು ದೇಶಕ್ಕೆ ಅವಶ್ಯ ಬೇಕಾದ ಶಾಂತಿ ನೆಮ್ಮದಿ ಕೊಡಿಸುವುದೋ ಎಂದು ನ್ಯಾಯ ಮೂರ್ತಿಗಳು ವಿಧಿಸಿದ ಮೂರು ತಿಂಗಳುಗಳ status quo ಉತ್ತರ ನೀಡಬಹುದು.            

ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನವನ್ನು ಕುತೂಹಲದಿಂದ ನೋಡುತ್ತಾ ಕೂತ ನಮಗೆ ಕಿಟಕಿಯ ಮೂಲಕ ಕಾಣಲು ಸಿಕ್ಕಿದ್ದು, ನನ್ನ ಎರದುಉವರೆ ವರ್ಷದ ಪುಟ್ಟ ಪೋರಿ ಕಾಲುದ್ದ ಮಾಡಿಕೊಂಡು ನನ್ನ ಮೇಜಿನ ಮೇಲಿನಿಂದ ಎಗರಿಸಿದ ಪುಟ್ಟ ಭಾರತದ ಧ್ವಜದಿಂದ ತನ್ನ ಮುಖಕ್ಕೆ ತಂಗಾಳಿಯನ್ನು ಬೀಸಿಕೊಳ್ಳುತ್ತಾ ಮಂದಿರ ಮಸೀದಿ ವಿವಾದ ನನಗೆ ನಗಣ್ಯ ಎನ್ನುವ ಥರ ಕೂತಿದ್ದಳು.

ಇಂದು ಬೆಳಿಗ್ಗೆ ನನ್ನ mobile ಗೆ ಬಂದ ಸಂದೇಶ; who are we Hindu or Muslim? When there is “Ali” in “Diwali” and “Ram” in “Ramadan” cant we help India to be united?

ಮುಸ್ಲಿಮರಲ್ಲಿ ಕಾಣಲು ಸಿಕ್ಕಿದ ಈ ಮೇಲಿನ ಉದಾತ್ತ, ಸಾಮರಸ್ಯದ ಭಾವನೆ ಸರ್ವರಲ್ಲೂ ಕಾಣುವಂತಾಗಲಿ ಎಂದು ಆಶಿಸುತ್ತಾ..

ಬ್ರಾಹ್ಮಣ ಯುವತಿಯ ಉರ್ದು ಶಾಯರಿ

ನಮ್ಮ ಭಾರತ ವೈವಿಧ್ಯಮಯ ದೇಶ. ಹಲವು ಸಂಸ್ಕೃತಿಗಳ ಬೀಡು. ಇಲ್ಲಿ ಎಲ್ಲರ ಭಾವನೆಗಳನ್ನೂ ಗೌರವಿಸಿ, ಆದರಿಸಿ ನಡೆಯುವುದು ಹೇಗೆ ಎಂದು ನಮ್ಮ ಜನರಿಗೆ ಚೆನ್ನಾಗಿ ಗೊತ್ತು. ಆ ಕಾರಣಕ್ಕಾಗೆ ನಮ್ಮ ದೇಶ ವಿಶ್ವದ ಪ್ರಶಂಸೆಗೆ ಪಾತ್ರ. ಇಲ್ಲಿ ಹಿಂದೂ, ಜೈನ, ಕ್ರೈಸ್ತ ಧರ್ಮದವರಿಗೆ ಸಿಕ್ಕ ಮನ್ನಣೆಯೇ ಮುಸ್ಲಿಂ ಸೂಫಿ ಸಂತರಿಗೂ ಸಿಕ್ಕಿತು. ಸೂಫಿ ಸಂತರ ಬದುಕಿನ ರೀತಿ ನೋಡಿ ಅವರನ್ನು ಅನುಸರಿಸಿದವರೂ ಕಡಿಮೆಯಲ್ಲ. ಹಾಗೆಯೇ ಹಿಂದೂ ಧರ್ಮಾಚರಣೆ ಗಳನ್ನೂ, ಅವರ ದೇವ ದೇವತೆಗಳನ್ನೂ ಕೊಂಡಾಡಿದ ಮುಸ್ಲಿಮರಿಗೂ ಕೊರತೆಯಿಲ್ಲ. ಬ್ರಾಹ್ಮಣ ಮಹಿಳೆ ಇಸ್ಲಾಮನ್ನು ಪ್ರಶಂಸಿಸಿ ಶಾಯರಿ ಪ್ರಸ್ತುತ ಪಡಿಸಿದ್ದು ಮೇಲೆ ಹೇಳಿದ ವಿಶಾಲ ಹೃದಯಕ್ಕೆ ಸಾಕ್ಷಿ. ಕೆಳಗಿದೆ ನೋಡಿ ಕೊಂಡಿ,  

https://hasnain.wordpress.com/2010/08/10/lata-haya-about-islam/

ವ್ರತಾಚರಣೆಯ ಮಾಸ

ರಮದಾನ್, (ರಂಜಾನ್ ಎಂದೂ ಕರೆಯಲ್ಪಡುತ್ತದೆ, ramzan) ಇಸ್ಲಾಮೀ ಪಂಚಾಂಗದ ಒಂಭತ್ತನೆ ತಿಂಗಳು ಮತ್ತು ಇಸ್ಲಾಮಿನ ಐದು ಸ್ಥಂಭಗಳಲ್ಲಿ ಮೂರನೆಯ ಸ್ಥಂಭವಾದ ರಮದಾನ್ ತಿಂಗಳಿನಲ್ಲಿ ಜಗತ್ತಿನ ಮುಸ್ಲಿಮರು ದಿನವಿಡೀ ಉಪವಾಸವಿದ್ದು ವಿಶೇಷ ಆರಾಧನೆಯಲ್ಲೂ, ಪವಿತ್ರ ಕುರಾನ್ ಪಾರಾಯಣದಲ್ಲೂ ತಮ್ಮ ಸಮಯ ಕಳೆಯುತ್ತಾರೆ. ಈ ಕಾರಣಕ್ಕಾಗಿ ಈ ಮಾಸವನ್ನು ದಾನದ, ಧ್ಯಾನದ ಮತ್ತು ಚಿಂತನೆಯ ಮಾಸವೆಂದು ಕರೆಯುತ್ತಾರೆ (month of charity, contemplation, and reflection). ಚಂದ್ರ ದರ್ಶನದೊಂದಿಗೆ ಆರಂಭವಾಗುವ ೩೦ ದಿನಗಳ ಈ ಉಪವಾಸ ವ್ರತ ಮುಸ್ಲಿಮ್ ಜಗತ್ತಿಗೆ ಹೊಸ ಚೈತನ್ಯವನ್ನೂ, ಧಾರ್ಮಿಕತೆಯನ್ನೂ ತುಂಬುತ್ತದೆ.

ನಮ್ಮನ್ನು ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸುವುದಕ್ಕೆ, ಪ್ರಾಮುಖ್ಯತೆ ಹೆಚ್ಚು. ಯಾವುದೇ ಪರಿಸ್ಥಿತಿಯಲ್ಲೂ ಐದು ಹೊತ್ತಿನ ನಮಾಜನ್ನು ನಿರ್ವಹಿಸಲೇಬೇಕು. ನಮಾಜ್ ಜೊತೆಗೆ ಕುರಾನ್ ಸೂಕ್ತಗಳನ್ನು ಪಠಿಸುವುದು, ಹಜ್ ಯಾತ್ರೆ, ಇವೂ ಸಹ ಆರಾಧನೆಯಲ್ಲೇ ಒಳಗೊಳ್ಳುತ್ತದೆ. ಆದರೆ ನಮಾಜ್, ಕುರಾನ್ ಪಠಣ, ಹಜ್ ಇತ್ಯಾದಿಗಳು  ತೋರಿಕೆಯ ಆರಾಧನೆಯಾಗಿಯೂ ಮಾರ್ಪಡಬಹುದು. ನಾನು ಧರ್ಮಿಷ್ಠ ಎಂದು ತೋರಿಸಲು ಎಲ್ಲರಿಗೂ ಕಾಣುವಂತೆ ಮಸ್ಜಿದ್ ಗೆ ಹೋಗುವುದು, ಹಜ್ ಯಾತ್ರೆ ಮಾಡುವುದು ಹೀಗೆ. ಆದರೆ ವ್ರತಾಚಾರಣೆ ಹಾಗಲ್ಲ. ಇದೊಂದು ರಹಸ್ಯ ಆರಾಧನೆ. ಉಪವಾಸವಿರುವವನ ಮತ್ತು ಅವನ ಪ್ರಭುವಿಗೆ ಮಾತ್ರ ತಿಳಿಯುವ ಆರಾಧನೆ. ಮೂರನೆಯ ವ್ಯಕ್ತಿಗೆ ಇದರ ಅರಿವಿರುವುದಿಲ್ಲ; ಹಾಗಾಗಿ ವ್ರತಾಚರಣೆಗೆ ಹೆಚ್ಚು ಮಹತ್ವ.    

ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದವರೆಗೆ ಉಪವಾಸದ ಅವಧಿ. ಅರುಣೋದಯದ “ಪ್ರಾರ್ಥನೆಯ ಕರೆ” ( “ಅದಾನ್” ) ಕಿವಿಗೆ ಬಿದ್ದ ಕೂಡಲೇ ಆಹಾರ, ಪಾನೀಯಗಳು ನಿಷಿದ್ಧವಾಗುತ್ತವೆ. ಅದೇ ರೀತಿ ಸೂರ್ಯಾಸ್ತದ ಪ್ರಾರ್ಥನೆಯ ಕರೆ ಕೇಳಿದ ಕೂಡಲೇ ಸ್ವಲ್ಪ ನೀರು ಮತ್ತು ಖರ್ಜೂರದ ಸಹಾಯದಿಂದ ಉಪವಾಸವನ್ನು ಕೊನೆಗೊಳಿಸಲಾಗುತ್ತದೆ. ಇಡೀ ದಿನದ ಉಪವಾಸದಿಂದ ಶರೀರದ ಮೇಲೆ ಹೆಚ್ಚು ವ್ಯತಿರಿಕ್ತ ಪರಿಣಾಮ ಆಗಬಾರದು ಎಂದು ಮಧ್ಯ ರಾತ್ರಿಯ ನಂತರ ಅಥವಾ ಅರುಣೋದಯದ ಸ್ವಲ್ಪ ಮೊದಲು ಸ್ವಲ್ಪವಾದರೂ ಆಹಾರ (ಇದಕ್ಕೆ “ಸುಹೂರ್” ಎಂದು ಕರೆಯುತ್ತಾರೆ) ತೆಗೆದು ಕೊಳ್ಳಲೇಬೇಕು. ಅದೇ ರೀತಿ ದಿನವಿಡೀ ಒಂದು ತೊಟ್ಟೂ ನೀರಿಲ್ಲದೆ, ತಮ್ಮ ದಿನಚರಿಗೆ ಯಾವುದೇ ಧಕ್ಕೆ ಬಾರದಂತೆ ತಮ್ಮ ಕೆಲಸ, ಧಂಧೆ ಮಾಡುತ್ತಾ ಉಪವಾಸವಿದ್ದು ಸೂರ್ಯಾಸ್ತಕ್ಕೆ ಒಂದು ಗುಟುಕು ನೀರು ಮತ್ತು ಒಂದು ತುಂಡು ಖರ್ಜೂರದ ಸಹಾಯದಿಂದ ಉಪವಾಸ ಕೊನೆಗೊಳಿಸುವುದಕ್ಕೆ  “ಇಫ್ತಾರ್” ಎಂದು ಕರೆಯುತ್ತಾರೆ. ಇಫ್ತಾರ್ ಪದವನ್ನು ತಾವು ಕೇಳಿರಲೇಬೇಕು, ನಮ್ಮ ರಾಜಕಾರಣಿಗಳು ಮುಸ್ಲಿಂ ಗೆಳೆಯರಿಗೆ ಏರ್ಪಡಿಸುವ ಔತಣ. ಪ್ರಾಯಕ್ಕೆ ಬಂದ ಪ್ರತೀ ಮುಸ್ಲಿಮ್ ಉಪವಾಸ ವ್ರತ ಆಚರಿಸಲೇಬೇಕು ಎಂದು ಕಡ್ಡಾಯವಾದ ನಿಯಮ. ಖಾಯಿಲೆಯಿಂದ ಬಳಲುವವರಿಗೆ ಮತ್ತು ಯಾತ್ರಿಗಳಿಗೆ ಇದರಿಂದ ವಿನಾಯಿತಿ ಇದ್ದು ಯಾತ್ರೆ ಮುಗಿದ ನಂತರ, ಮತ್ತು ಖಾಯಿಲೆಯಿಂದ ಗುಣಮಮುಖರಾದ ನಂತರ ತಪ್ಪಿಹೋದ ಉಪವಾಸ ದಿನಗಳನ್ನು ಉಪವಾಸ ಇರುವ ಮೂಲಕ ತೀರಿಸಬೇಕು,ಅದೂ ಸಾಧ್ಯವಾಗದಿದ್ದರೆ ತಪ್ಪಿ ಹೋದ ದಿನಗಳಿಗೆ ಪ್ರಾಯಶ್ಚಿತ್ತವಾಗಿ ಬಡ ಬಗ್ಗರಿಗೆ ಅನ್ನದಾನ ಮಾಡಬೇಕು.

ರಮದಾನ್ ಮಾಸದ ಮಹತ್ವದ ಬಗ್ಗೆ ಹೇಳುತ್ತಾ ಪ್ರವಾದಿಗಳು ಹೇಳಿದ್ದು, ರಮದಾನ್ ಮಾಸ ೭೦,೦೦೦ ತಿಂಗಳು ಗಳಿಗೆ ಸಮಾನ ಎಂದು. ಅದೂ ಅಲ್ಲದೆ ಇದೇ ತಿಂಗಳಿನಲ್ಲಿ ಪವಿತ್ರ ಕುರಾನ್ ನ ಸೂಕ್ತಗಳು ಅವತೀರ್ಣವಾಗಿದ್ದು.  ಈ ಕಾರಣಕ್ಕಾಗಿ ಜಗದಾದ್ಯಂತ ಮುಸ್ಲಿಮರು ಈ ತಿಂಗಳ ತಮ್ಮ ಬಿಡುವಿನ ವೇಳೆಯಲ್ಲಿ ಮತ್ತು ಹೆಚ್ಚು ಸಮಯ ಕುರಾನ್ ಪಾರಾಯಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಹಾಗೆಯೆ ಈ ತಿಂಗಳಿನಲ್ಲಿ ರಾತ್ರಿಯಲ್ಲಿ “ತರಾವೀಹ್” ಎಂದು ಕರೆಯಲ್ಪಡುವ ವಿಶೇಷ ಪ್ರಾರ್ಥನೆಗಳು ಸಹ ನಡೆಯುತ್ತವೆ. ಪ್ರತೀ ಆರಾಧನೆ, ದಾನ, ಒಳ್ಳೆಯ ಮಾತು, ಕೃತಿ ಇವುಗಳಿಗೆ ಪ್ರತಿಫಲ ಸಹ ೭೦,೦೦೦ ಪ್ರತಿಫಲದ ರೀತಿಯಲ್ಲಿ ದೇವರು ಕೊಡುವನೆಂದೂ ಮುಸ್ಲಿಮ್ ವಿಧ್ವಾಂಸರು ಹೇಳುತ್ತಾರೆ.      

ರಮದಾನ್ ತಿಂಗಳಿನಲ್ಲಿ ನಾವು ಮಾಡುವ ಪ್ರತೀ ಕೆಲಸವೂ ಇಸ್ಲಾಮೀ ಆದರ್ಶಗಳಿಗೆ ಪೂರಕವಾಗಿರಬೇಕೆಂದು ವಿಧ್ವಾಂಸರುಗಳು ಎಚ್ಚರಿಸುತ್ತಾರೆ. ಈ ಮಾಸದಲ್ಲಿ ಉದ್ರೇಕ ಪಡುವುದಾಗಲೀ,ಕೆರಳುವುದಾಗಲೀ ಮಾಡಬಾರದು. ಹಾಗೇನಾದರೂ ಯಾರಾದರೂ ಉದ್ರೇಕಿಸಿದರೆ “ನಾನು ವ್ರತಾಚರಣೆ ಮಾಡುತ್ತಿದ್ದೇನೆ” ಎಂದು ಹೇಳಿ ಮೌನವಾಗಿರಬೇಕು ಎಂದು ಸಲಹೆ ನೀಡುತ್ತಾರೆ. ಜ್ಞಾನಾರ್ಜನೆ, ಮತ್ತು ಸಂಯಮ ಪಾಲನೆ ರಮದಾನ್ ತಿಂಗಳ ವೈಶಿಷ್ಟ್ಯ ಎನ್ನಬಹುದು. ವ್ರತಾಚರಣೆಯ ಮೂಲಕ ರಮದಾನ್ ತಿಂಗಳು ನಮಗೆ “ಸ್ವ ನಿಗ್ರಹ” ದ ಗುಣವನ್ನೂ, ಸಂಯಮ ಶೀಲತೆಯನ್ನೂ ಕಲಿಸುತ್ತದೆ. ಈ ತೆರನಾದ ನಡವಳಿಕೆ ಮುಸ್ಲಿಮರು ಬರೀ ರಮದಾನ್ ಮಾಸಕ್ಕೆ ಸೀಮಿತಗೊಳಿಸದೆ ತಮ್ಮ ಬದುಕಿನ ಪ್ರತೀ ಘಳಿಗೆಯಲ್ಲೂ ಪಾಲಿಸಿದರೆ ದೇವರು ಯಶಸ್ಸನ್ನು ದಯಪಾಲಿಸುತ್ತಾನೆ ಸಮಾಜಕ್ಕೆ ಆದರ್ಶಪ್ರಾಯನಾಗಿ ಬದುಕುತ್ತಾನೆ.  

ಪ್ರತೀ ಮುಸ್ಲಿಂ ಮನೆಯಲ್ಲೂ ರಮದಾನ್ ಒಂದು ವಿಶೇಷ ತಿಂಗಳಾಗಿರುತ್ತದೆ. ಅದರಲ್ಲೂ ಮಕ್ಕಳಿಗೆ ಒಂದು ರೀತಿಯ ಸಂತಸ. ಐದು ವರ್ಷದ ಮೇಲ್ಪಟ್ಟ ಮಕ್ಕಳೂ ಸಹ ಪೂರ್ತಿ ತಿಂಗಳಲ್ಲದಿದ್ದರೂ ಸಾಧ್ಯವಾದಷ್ಟು ದಿಂದ ಉಪವಾಸ ಆಚರಿಸಲು ಯತ್ನಿಸುತ್ತಾರೆ. ನನ್ನ ಆರು ವರ್ಷದ ಮಗ ಕಳೆದ ಎರಡು ವರ್ಷಗಳಿಂದ ೮ – ೧೦ ದಿನ ಉಪವಾಸವಿದ್ದನು. ಸಂಜೆಯಾಗುತ್ತಿದ್ದಂತೆ ಮಕ್ಕಳು ಕಾತುರದಿಂದ ಮಸ್ಜಿದ್ ಗಳ ಗೋಪುರಗಳು ಹೊರಡಿಸುವ ಅದಾನ್ ಗಾಗಿ ಕಾದು ನಿಂತು “ಅಲಾಹು ಅಕ್ಬರ್” (ದೇವರು ಸರ್ವಶ್ರೇಷ್ಠ ) ಎನ್ನುವುದನ್ನು ಕೇಳುತ್ತಲೇ ಓಡಿ ಬಂದು ಅಮ್ಮಾ, ಅಪ್ಪಾ, ಅದಾನ್ ಆಗುತ್ತಿದೆ, ಬೇಗ ನೀರು ಕುಡಿಯಿರಿ ಎಂದು ಉತ್ತೇಜಿಸುತ್ತಾರೆ.

೩೦ ದಿನಗಳ ಉಪವಾಸ ಮುಗಿದ ನಂತರ ಚಂದ್ರ ದರ್ಶನ ವಾಗುತ್ತಲೇ “ಈದ್” ಸಂಭ್ರಮ ಎಲ್ಲೆಡೆ. ಚಂದ್ರ ದರ್ಶನ ಆಗುತ್ತಲೇ ಮಾರನೆ ದಿನದ ಈದ್ ನಂದು ಯಾರೂ ತಿನ್ನಲು ಇಲ್ಲದೆ ಬಳಲಬಾರದು ಎಂದು ಬಡಬಗ್ಗರಿಗೆ ಅಕ್ಕಿ ದಾನ ಮಾಡುತ್ತಾರೆ. ಈ ದಾನದಿಂದಾಗಿಯೇ ಈದ್ ಹಬ್ಬಕ್ಕೆ “ಈದ್ ಅಲ್ ಫಿತ್ರ್” ಎಂದು ಹೆಸರು.         

ಸೌದಿ ಅರೇಬಿಯಾದಲ್ಲಿ ರಮದಾನ್ ತುಂಬಾ ಸೊಗಸು. ಇಡೀ ತಿಂಗಳು ಮತ್ತು ಅದರ ನಂತರ ಬರುವ ಸುಮಾರು ಹತ್ತು ದಿನಗಳ ಈದ್ ಸಂಭ್ರಮ. ಇಡೀ ನಗರವೇ ಅಲಂಕಾರದಲ್ಲಿ ಮುಳುಗಿರುತ್ತದೆ. ಎಲ್ಲೆಲ್ಲೂ ವಿಶೇಷ offer ಗಳು, ಬಹುಮಾನಗಳು, ರಸ್ತೆ ಬದಿಯಲ್ಲಿ ಉಪವಾಸವಿಟ್ಟುಕೊಂಡು ಪ್ರಯಾಣ ಮಾಡುವವರಿಗೆ ಪುಕ್ಕಟೆ ತಿಂಡಿ ತೀರ್ಥಗಳ ವಿತರಣೆ, ನಿರ್ಗತಿಕರಿಗೆ, ಕೆಳಸ್ತರದ ಉದ್ಯೋಗ ಮಾಡುವವರಿಗೆ ದಾನ ಮಾಡುವಲ್ಲಿ ಪೈಪೋಟಿ, ಹೀಗೆ ನಾನಾ ರೀತಿಯ ಚಟುವಟಿಕೆಗಳನ್ನು ಕಾಣಬಹುದು. ಕೆಲಸದ ಸಮಯವೂ ನಾಲ್ಕು ಅಥವಾ ಐದು ಘಂಟೆಗಳು. ಹಾಗಾಗಿ ಉಪವಾಸವಿರುವುದು ಬಹಳ ಸುಲಭ ಅರೇಬಿಯಾದಲ್ಲಿ.

ಬೇಡದ ಕಡೆ ತಲೆ ಹಾಕಿದ ಕರಡಿ

ನಮಗೆ ಅವಶ್ಯಕತೆ ಇರದ ಕಡೆ ತಲೆ ಹಾಕಬಾರದು ಎಂದು ಹಿರಿಯರ ಬುದ್ಧಿವಾದ. ಕಿತಾಪತಿ ಮಾಡುವವರನ್ನು ಕಂಡರೆ ಹೇಳುತ್ತಾರೆ ಬೇಡದೆ ಇರೋ ಜಾಗದಲ್ಲಿ ತಲೆ ಹಾಕೋದು ಅಂದ್ರೆ ಇವ್ನಿಗೆ ತುಂಬಾ ಇಷ್ಟ ಎಂದು ತೆಗಳೋದನ್ನೂ ನಾವು ಕೇಳಿದ್ದೇವೆ. ಆದರೆ ಇಲ್ಲಿ ಬೇಡ ಕಡೆ ತಲೆ ಹಾಕಿ ಮಂಗಳಾರತಿ ಮಾಡಿಸಿ ಕೊಂಡಿದ್ದು ಹುಲು ಮನುಜನಲ್ಲ. ಬದಲಿಗೆ ಮೈ ತುಂಬಾ ಕೇಶ ಇಟ್ಟುಕೊಂಡು ನಮ್ಮ ಮಕ್ಕಳಿಗೆ ಬೊಂಬೆ ರೂಪದಲ್ಲೂ, ನಿಜ ರೂದಲ್ಲೂ ಕಚಗುಳಿ ಇಡುವ ಜಾಂಬವ. ಕರಡಿ.

ಫ್ಲೋರಿಡಾ ರಾಜ್ಯದಲ್ಲಿರುವ “ಒಕಾಲಾ” ನಗರದಲ್ಲಿ ವಾಸಿಸುವ ಕರಡಿಯೊಂದು ತನ್ನ ತಲೆಯನ್ನು ಪ್ಲಾಸ್ಟಿಕ್ ಬಾಟಲಿ ಯೊಂದರಲ್ಲಿ ಸಿಕ್ಕಿಸಿಕೊಂಡು ಪರದಾಡಿತು. ಪೂರ್ತಿ ಹತ್ತು ದಿನ. ಓಹ್, ಹತ್ತು ದಿನಗಳ ಮನುಷ್ಯನ ನಿರ್ಲಕ್ಷ್ಯೆ ಕಾರಣ  ಕಾಲ ತಿನ್ನಲು, ಕುಡಿಯಲು ಆಗದೆ ಒದ್ದಾಡಿದ ಕರಡಿಗೆ ಕೊನೆಗೆ ಮುಕ್ತಿ ಸಿಕ್ಕಿದ್ದೂ ಭಾಗ್ಯಕ್ಕೆ ಮನುಷ್ಯನಿಂದಲೇ. ಪ್ರವಾಸದ ವೇಳೆ ಹೋದ ಹೋದೆಡೆ ನಮ್ಮ ಗಾರ್ಬೇಜ್ ಎಳೆ ದು ಕೊಂಡು ಹೋಗುವ ನಮಗೆ ನಿಸರ್ಗದ ಕಡೆ ನಮಗಿರುವ ಬೇಜವಾಬ್ದಾರಿತನಕ್ಕೆ ಪ್ರವಾಸ ಅಥವಾ ಪರ್ಯಟನ ಕಳೆದು ಬರುವಾಗ ನಮ್ಮ ಹಿಂದೆ ಬಿಟ್ಟು ಹೋಗುವ ತಿಪ್ಪೆಗಳೇ ಸಾಕ್ಷಿ.

ಜೆಡ್ಡಾ ದಿಂದ ಸುಮಾರು ೨೦೦ ಕಿ.ಮೀ ಇರುವ ನಮ್ಮ ಕೆಮ್ಮಣ್ಣು ಗುಂಡಿಯನ್ನು ಹೋಲುವ “ತಾಯಿಫ್” ಭೇಟಿಯ ವೇಳೆ ಬೆಟ್ಟದ ಕೆಳಗಿನ ದಾರಿಯಲ್ಲಿ ಒಂದು ಮರವನ್ನು ಕಂಡೆ. ಸಾಮಾನ್ಯವಾಗಿ ಮರ ಎಂದ ಮೇಲೆ ಎಲೆಗಳು ಇದ್ದೇ ಇರುತ್ತವೆ, ಅಲ್ಲವೇ? ಸಖೇದಾಶ್ಚರ್ಯ, ಇದೊಂದು ವಿಚಿತ್ರ ಮರವಾಗಿ ಕಂಡಿತು ನನಗೆ. ಮರದ ಟೊಂಗೆಯ ತುಂಬಾ ಬಣ್ಣ ಬಣ್ಣದ, ವಿವಿಧ ಆಕಾರದ, ಗಾತ್ರದ ಚೀಲಗಳು. ಪ್ಲಾಸ್ಟಿಕ್ ಚೀಲಗಳು. ಸಂಪೂರ್ಣ ಮರವನ್ನು ಆವರಿಸಿ ಬಿಟ್ಟಿತ್ತು. ಗಾಡಿಯಲ್ಲಿ ಹೋಗುವಾಗ ಮೇಯೋದು, ತದನಂತರ ಬಿಡೋದು ಗಾಳಿ ಪಟವ. ಅಲ್ಲಲ್ಲ, ಪ್ಲಾಸ್ಟಿಕ್ ಪಟವ. ಸ್ವಲ್ಪ ದೂರ ಹೋದ ನಂತರವೇ ನನ್ನ ಮಂದ ಮಾತಿಗೆ ತೋಚಿದ್ದು ಒಹ್, ಈ ಮರದ ಚಿತ್ರವೊಂದನ್ನು ಕ್ಲಿಕ್ಕಿಸಬೇಕಿತ್ತು ಎಂದು.       

ತನ್ನ ಸುಂದರ ಮೂತಿಯನ್ನು ಈ ಪ್ಲಾಸ್ಟಿಕ್ ಬಾಟಲಿಗೆ ಸಿಕ್ಕಿಸಿಕೊಂಡ ಕೇವಲ ಆರು ತಿಂಗಳ ಹಸುಳೆ ಕರಡಿಗೆ ವನ್ಯ ಜೀವಿ ಸಂರಕ್ಷಕರು ಬಂದು ಮೊದಲು ಪಕ್ಕದಲ್ಲೇ ಇದ್ದ ಅದರ ತಾಯಿಗೆ ಶಾಂತ ಗೊಳಿಸುವ ಚಚ್ಚು ಮದ್ದನ್ನು ನೀಡಿ ಪ್ಲಾಸ್ಟಿಕ್ ಮುಕ್ತ ಗೊಳಿಸಿದರು. ಅವರ ಪ್ರಕಾರ ಆ ಕರಡಿ ಒಂದೆರಡು ದಿನಗಳಲ್ಲಿ ಸಾಯುತ್ತಿತ್ತಂತೆ ಬಾಟಲಿ ಕಾರಣ  ತಿನ್ನಲು ಕುಡಿಯಲು ಆಗದೆ.     

ಚಿತ್ರ ಕೃಪೆ: http://www.newstimes.com/news/article/Plastic-jar-removed-from-Fla-bear-cub-s-head-615774.php#photo-3

ಒಂದು ತಮಾಷೆಯ ಸಂಜೆ

ತಂಗಿ ರಜೆಯ ಮೇಲೆ ಭಾರತಕ್ಕೆ ಹೋಗಿದ್ದರಿಂದ ಅವಳ ಮನೆಯಲ್ಲೂ, ನನ್ನ ಮನೆಯಲ್ಲೂ ವಾಸ. ಮಧ್ಯಾಹ್ನ  ನಾಲ್ಕು ಘಂಟೆಗೆ ಚಹಾ ಮುಗಿಸಿ ಹೊರಟಾಗ ನನ್ನ ಪತ್ನಿ ಹೇಳಿದಳು ನಮ್ಮನ್ನೂ ಮನೆಗೆ ಬಿಡಿ ಎಂದಳು. ಮಗ ಓಡಿ ಬಂದು ಮುಂದಿನ ಸೀಟಿನಲ್ಲೂ, ಮಗಳು ಹಿಂದಿನ ಸೀಟಿನಲ್ಲೂ ಕೂತರು. ಮಡದಿ ಕೆಲವು ಸಾಮಾನುಗಳನ್ನು ಡಿಕ್ಕಿಯಲ್ಲೂ, ಹಿಂದಿನ ಸೀಟಿನಲ್ಲೂ ಇಡುತ್ತಿದ್ದಳು. ಹಿಂದಿನ ಡೋರ್ ಹಾಕಿದ ಸದ್ದು ಕೇಳುತ್ತಿದ್ದಂತೆ ನಾನು ಕಾರನ್ನು ಚಲಾಯಿಸಿದೆ. ಗಾಡಿ ಚಲಾಯಿಸುತ್ತಾ ಆಫೀಸಿನಲ್ಲಿ ನಡೆದ ತಮಾಷೆಯ ಪ್ರಸಂಗವನ್ನು ಹೇಳುತ್ತಾ ಹೊರಟೆ. ಹಾಂ, ಹೂಂ ಏನೂ ಇಲ್ಲದ್ದನ್ನು ಗಮನಿಸದೆ ನನ್ನ ಪಾಡಿಗೆ ನಾನು ಮಾತನ್ನಾಡುತ್ತಿರುವಾಗ ಫೋನ್ ರಿಂಗ್ ಆಯಿತು, ನೋಡಿದರೆ ನನ್ನ ಹೆಂಡತಿಯ ನಂಬರ್, ಯಾಕ್ ಕಾಲ್  ಮಾಡ್ತಾ ಇದ್ದೀಯ ನನಗೆ ಎನ್ನುತ್ತಾ ಕನ್ನಡಿಯ ಮೂಲಕ ಹಿಂದಕ್ಕೆ ನೋಡಿದರೆ ಗಾಡಿಯಲ್ಲಿ ಅವಳಿಲ್ಲ. ಅರ್ರೇ, ಇದೇನಿದು, ಅವಳು ಕೂತೆ ಇಲ್ಲ, ನಾನು ಗಾಡಿ ಚಲಾಯಿಸುತ್ತಾ ಬಂದೆನಲ್ಲಾ, ಈ ಪುಟಾಣಿಗಳಾದರೂ ಹೇಳಬಾರದೆ ಅಮ್ಮ ಗಾಡಿಯಲ್ಲಿಲ್ಲ ಎಂದು ನನಗೆ ನಾನೇ ಹೊಟ್ಟೆ ತುಂಬಾ ನಗುತ್ತಾ ಹೆಂಡತಿಯನ್ನ ಪಿಕ್ ಮಾಡಲು ಹೋದರೆ ಮುಖ ಕೆಂಪಗೆ ಮಾಡಿಕೊಂಡು ನಿಂತಿದ್ದಳು ನನ್ನನ್ನು ಶಪಿಸುತ್ತಾ. ಅಲ್ಲಾ ಇದೇ ಥರಾ ನನ್ನನ್ನು ಎಲ್ಲಾದರೂ ಡೆಸರ್ಟ್ ನಲ್ಲೋ ಮತ್ತೆಲ್ಲೋ ಬಿಟ್ಟು ಹೋದರೆ ಹೇಗ್ರೀ ಎಂದು ಗದರಿಸುತ್ತಾ ಹತ್ತಿದಳು ಕಾರನ್ನು.   

ದುರಂತ ಕಂಡ ಅತ್ರಿ ಪ್ರಕಾಶನ

ಕನ್ನಡಿಗನೊಬ್ಬನ ಕನ್ನಡ ಪುಸ್ತಕ ಮಾರುವ ಧಂಧೆ ಕನ್ನಡಿಗರ ಅಸಡ್ಡೆ, ನಿರುತ್ಸಾಹ, ಅವಗಣನೆ ಯಿಂದ ಯಾವ ರೀತಿ ಅವಸಾನದ ಅಂಚಿನಲ್ಲಿದೆ ಎನ್ನುವ ಒಂದು ಲೆಲ್ಹನವನ್ನು ಓದಿದೆ. ಕಣ್ಣಲ್ಲಿ ನೀರು ಬಂತು ಇದನ್ನು ಓದಿ. ಪರಭಾಷಾ ವ್ಯಾಮೋಹಕ್ಕೆ ಒಳಗಾಗಿ ನಮ್ಮ ಸ್ವಂತ ಭಾಷೆಯನ್ನೂ ಕಡೆಗಣಿಸುವ, ಅಷ್ಟೇ ಅಲ್ಲ ಆ ಕಡೆ ಗಣಿ ಸುವಿಕೆಗೆ ತಮ್ಮದೇ ಆದ ಕುತರ್ಕಗಳನ್ನು ನೀಡುವ ಮಂದಿ ಎಂದು ಎಚ್ಚೆತ್ತು ಕೊಳ್ಳುತ್ತಾರೋ ನೋಡಬೇಕು. ಪೂರ್ತಿ ಓದಿಗೆ ಕೆಳಗಿನ ಕೊಂಡಿ ಕ್ಲಿಕ್ಕಿಸಿ..

ಅತ್ರಿ ತಮ್ಮ ಪ್ರಕಾಶನವನ್ನು ಮುಚ್ಚಿದರು

ಮರೆತು ಹೋದ ಮಾತೃ ಭಾಷೆ

ಸೋನಿಯಾ ಅಮೇರಿಕೆಯಿಂದ ವಾಪಸಾಗಿ ಲೋಕಸಭೆಯ ಕಲಾಪಗಳಲ್ಲಿ ಮತ್ತು ತಮ್ಮ ಪಕ್ಷದ ಬೈಠಕ್ ವೊಂದರಲ್ಲಿ ಭಾಗಿಯಾದರು ಎಂದು ವರದಿ. ತಮ್ಮ ತಾಯಿಯವರ ಅನಾರೋಗ್ಯದ ಕಾರಣ ಅವರ ಶುಶ್ರೂಷೆಗೆಂದು ಅಮೆರಿಕೆಗೆ ಹೋಗಿದ್ದರು ಸೋನಿಯಾ ಗಾಂಧೀ.   

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದಾಗ ಇಟಲಿ ದೇಶದ ಟೀವೀ ಚಾನಲ್ ನ ತಂಡ ಅವರ ಸಂದರ್ಶನಕ್ಕೆಂದು ದಿಲ್ಲಿಗೆ ಬಂದಿತ್ತು. ಸಂದರ್ಶಕ ಇಟಾಲಿಯನ್ ಭಾಷೆಯಲ್ಲಿ ಪ್ರಶ್ನೆ ಕೇಳಲು ಆರಂಭಿಸಿದಾಗ ಸೋನಿಯಾ ನನಗೆ ಇಟಾಲಿಯನ್ ಭಾಷೆ ಬರುವುದಿಲ್ಲ, ದಶಕಗಳ ಹಿಂದೆಯೇ ಬಳಸುವುದನ್ನು ನಿಲ್ಲಿಸಿದ್ದರಿಂದ ಇಟಾಲಿಯನ್ ಭಾಷೆಯಲ್ಲಿ ಮಾತನಾಡಲಾಗದು ಎಂದು ಹೇಳಿದ್ದರು. ಯಾರೇ ಆದರೂ, ಅದೆಷ್ಟೇ ದಶಕಗಳನ್ನು ತಮ್ಮ ಮಾತೃ ಭಾಷೆಯ ನಂಟಿನಿಂದ ದೂರ ಇದ್ದರೂ ತಮ್ಮ ಸ್ವಂತ ಭಾಷೆಯನ್ನೂ ಮರೆಯುವ ಪ್ರಶ್ನೆಯೇ ಇರುವುದಿಲ್ಲ. ಆದರೆ ತಮ್ಮನ್ನು ವಿದೇಶೀ ಮಹಿಳೆ ಎಂದು ಜರೆಯುತ್ತಿದ್ದ ವಿರೋಧ ಪಕ್ಷಗಳಿಗೆ ಹೆದರಿ ತಮ್ಮ ಮಾತೃ ಭಾಷೆಯನ್ನು ನಿರಾಕರಿಸುವಂತೆ ಅವರನ್ನು ಪ್ರೇರೇಪಿಸಿತು. ಹಾಗಾದರೆ ತಮ್ಮ ತಾಯಿಯ ಶುಶ್ರೂಷೆ ಗೆಂದು ಅಮೆರಿಕೆಗೆ ಹೋದ ಸೋನಿಯಾ ತಮ್ಮ ತಾಯಿಯೊಂದಿಗೆ ಯಾವ ಭಾಷೆಯಲ್ಲಿ ಮಾತನಾಡಿಸಿರಬೇಕು? ಏಕೆಂದರೆ ಬಹುತೇಕ ಇಟಾಲಿಯನ್ನರಿಗೆ ಆಂಗ್ಲ ಭಾಷೆ ಬರುವುದಿಲ್ಲ. ಆಂಗ್ಲ ಭಾಷೆಯೇ ಶ್ರೇಷ್ಠ ಎಂದು ತಮ್ಮ ತಮ್ಮ ಮಾತೃ ನುಡಿಗಳನ್ನು ಕಡೆಗಣಿಸಿ ತಮ್ಮ ಮಕ್ಕಳಿಗೆ ಆಂಗ್ಲ ಭಾಷೆಯಲ್ಲಿ ಮಾತನಾಡಲು ಪ್ರೋತ್ಸಾಹಿಸುವ ಪಾಲಕರಿಗೆ ಗೊತ್ತಿದೆಯೇ ಸಂಪೂರ್ಣ ಯೂರೋಪಿನಲ್ಲಿ ಆಂಗ್ಲ ಭಾಷೆಯಲ್ಲಿ ಮಾತನ್ನಾಡುವ, ವ್ಯವಹರಿಸುವ ದೇಶ ಒಂದೇ ಒಂದು ಎಂಬುದು?      

ಒಬ್ಬ ಮಹಿಳೆ ಭಾರತೀಯ ಸಂಜಾತನನ್ನು ಪ್ರೀತಿಸಿ ಮದುವೆಯಾಗುತ್ತಾಳೆ, ಭಾರತೀಯ ಪೌರತ್ವ ಪಡೆದು ಇಲ್ಲಿನ ಸಂಸ್ಕೃತಿಗೆ ತಲೆಬಾಗಿ ಬದುಕನ್ನು ಸಾಗಿಸುತಾಳೆ. ಜನರ ಅಭೂತ ಪೂರ್ವ ಬೆಂಬಲದಿಂದ ಲಕ್ಷಾಂತರ ಮತಗಳಿಂದ ತನ್ನ ಪ್ರತಿಸ್ಪರ್ದಿಯನ್ನು  ಪರಾಭವ ಗೊಳಿಸಿದ್ದು ಮಾತ್ರವಲ್ಲದೆ ತನ್ನ ನಾಯಕತ್ವದಲ್ಲಿ ಪಕ್ಷವೊಂದನ್ನು ಅಧಿಕಾರದ ಗದ್ದುಗೆಗೂ ಏರಿಸುತ್ತಾಳೆ. ಈ ರೀತಿಯ ಜನಮನ್ನಣೆ ಇದ್ದರೂ ಆಕೆ ದೇಶದ ಅತ್ಯುನ್ನತ ಹುದ್ದೆಗೆ ಅನರ್ಹಳಾಗುತ್ತಾಳೆ. ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಕೂರಲು ಬಿಡದ ಜನರಿಗೆ ಬೆದರಿ ತನ್ನ ಮಾತೃ ಭಾಷೆಯಲ್ಲಿ ತನಗೆ ಮಾತನಾಡಲು ಬರುವುದಿಲ್ಲ ಎಂದು ಹೇಳಿಕೆಯನ್ನು ಕೊಡುತ್ತಾಳೆ. ಒಬ್ಬ ವ್ಯಕ್ತಿಗೆ ತನ್ನ ಮಾತೃ ಭಾಷೆಯಲ್ಲಿ ಮಾತನಾಡಲು ಹೆದರುವಂಥ ಪರಿಸ್ಥಿತಿ ಸೃಷ್ಟಿಸುವ ವ್ಯವಸ್ಥೆ ಮತ್ತು ಅಸಹನೆಯಿಂದ ನಾವು ವಿಶ್ವಕ್ಕೆ ನೀಡುತ್ತಿರುವ ಸಂದೇಶವಾದರೂ ಏನು?