why do they hate us?

ಆಫ್ಘಾನಿಸ್ತಾನದಲ್ಲಿ ಅಮೆರಿಕೆಯ ಸೈನ್ಯ ದಿಂದ ಮತ್ತೊಂದು ಅತಿರೇಕ. ಕೆಲ ದಿನಗಳ ಹಿಂದೆ ಪವಿತ್ರ ಕುರ್’ಆನ್ ಗ್ರಂಥಗಳನ್ನು ಸುಟ್ಟು ಸುದ್ದಿ ಮಾಡಿದ ಅಮೆರಿಕನ್ನರು ಈಗ ಸಾಮೂಹಿಕ ಕಗ್ಗೊಲೆ ಮೂಲಕ ಮತ್ತೊಮ್ಮೆ ವಿವಾದದ ಸುಳಿಗೆ ಸಿಕ್ಕಿ ಬಿದ್ದಿದ್ದಾರೆ. ಅಮೆರಿಕೆಯ ಸೈನಿಕನೊಬ್ಬ ತನ್ನ ಬ್ಯಾರಕ್ ನಿಂದ ಮಧ್ಯರಾತ್ರಿ ಎದ್ದು ಸಮೀಪದ ಗ್ರಾಮಕ್ಕೆ ನುಗ್ಗಿ ಮನೆಗಳಲ್ಲಿ ಮಲಗಿದ್ದ ಜನರ ಮೇಲೆ ಎರ್ರಾ ಬಿರ್ರಿ ಗುಂಡಿನ ಧಾಳಿ ನಡೆಸಿ ೧೬ ಜನರನ್ನು ಕೊಂದ. ಸತ್ತವರಲ್ಲಿ ೯ ಮಕ್ಕಳು ಸೇರಿದ್ದರು. ಈ ತೆರನಾದ senseless ಕೃತ್ಯಗಳು ಒಂದಲ್ಲ, ಎರಡಲ್ಲ, ನಮ್ಮ ಅರಿವಿಗೆ ಬಂದಿರುವುದು. ೨೦೦೬ ರಲ್ಲಿ ಇರಾಕಿನಲ್ಲಿ ೧೪ ವರ್ಷ ಪ್ರಾಯದ ಹುಡಗಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನೂ  ಆಕೆಯ ಇಡೀ ಕುಟುಂಬವನ್ನೂ ಅಮೆರಿಕೆಯ ಸೈನಿಕರು ಕೊಂದು ಹಾಕಿದ್ದರು.

ಈತ ಮಾನಸಿಕವಾಗಿ ಅಸ್ವಸ್ಥ ಎಂದು ಹೇಳಿ ಕೈ ತೊಳೆದು ಕೊಳ್ಳಲು ಅಮೇರಿಕಾ ನೋಡುತ್ತಿದೆ. ದೀರ್ಘಕಾಲದ ಮಿಲಿಟರಿ ಸೇವೆಯ ಕಾರಣ ಸೈನಿಕರು ಒತ್ತಡಕ್ಕೆ ಸಿಲುಕಿ ಕೊಳ್ಳುತ್ತಾರಂತೆ. ಇದನ್ನು ಆಂಗ್ಲ ಭಾಷೆಯಲ್ಲಿ PTSD ( post traumatic stress disorder ) ಎಂದು ಕರೆಯುತ್ತಾರೆ. ಆದರೆ ಈ ಸೈನಿಕ ptsd ಯಿಂದ ಬಳಲುತ್ತಿದ್ದನೆ ಎನ್ನುವುದು ಗೊತ್ತಿಲ್ಲ.  

ಅವಕಾಶ ಸಿಕ್ಕಾಗ ಯಾವುದಾದರೂ ದೇಶದೊಳಕ್ಕೆ ನುಗ್ಗುವುದು ಹೇಗೆ ಎಂದು ವಿಶ್ವದ ಸೂಪರ್ ಪವರ್ ಅಮೆರಿಕೆಗೆ ಯಾರೂ ಹೇಳಿ ಕೊಡಬೇಕಿಲ್ಲ. ಆದರೆ ನುಗ್ಗಿದ ನಂತರ ಅಲ್ಲಿನ ಜನರ ರೀತಿ ರಿವಾಜು, ಸಂಸ್ಕೃತಿ ಮುಂತಾದುವುಗಳ ಬಗ್ಗೆ ಸರಿಯಾಗಿ ಟ್ರೇನ್ ಮಾಡಲು ಜನರ ಅವಶ್ಯಕತೆ ಇದೆ ಎಂದು ಅಮೆರಿಕೆಯ ಸೈನ್ಯ ಎಸಗಿದ ಕೃತ್ಯಗಳು ಹೇಳುತ್ತವೆ.

ನನ್ನ ಅಮೆರಿಕೆಯ ಭೇಟಿ ವೇಳೆ ಕೆಲವು ಅಮೆರಿಕನ್ನರ ಭೇಟಿಯಾಯಿತು ರೆಸ್ಟುರಾಂಟ್ ಒಂದರಲ್ಲಿ. ಹೀಗೇ ಮಾತನಾಡುತ್ತಿದ್ದಾಗ ಅವರುಗಳು ಹೇಳಿದ್ದು,  we do so much to poor and needy countries in the world and why do they still hate us? ಇದಕ್ಕೆ ಉತ್ತರ ನನ್ನ ಬಳಿ ಇದ್ದರೂ ಹೇಳಲು ಸಾಧ್ಯವಾಗಲಿಲ್ಲ.  ಕಾರಣ ನಾನು ಅವರ ಅತಿಥಿ. ಅತಿಥಿ ನಲ್ನುಡಿಗಳನ್ನೇ ಆಡಬೇಕು, ಎಷ್ಟೇ ಕಷ್ಟವಾದರೂ.

ಜ್ಞಾಪಕ ಶಕ್ತಿ ಹೆಚ್ಚಲು…..

ಜ್ಞಾಪಕ ಶಕ್ತಿ ಹೆಚ್ಚಲು  ದಿನಕ್ಕೊಂದು ಲೋಟ ಹಾಲು ಕುಡಿಯಬೇಕಂತೆ. ಅಮೆರಿಕೆಯ ಮೇಯ್ನ್ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆ, ಅಥವಾ some-ಶೋಧನೆ. ಯಾವುದಾರೂ ಕಂಪೆನಿ, ಹಾಲಿನ ಕಂಪೆನಿಯೋ, ಚಾಕಲೇಟ್ ಕಂಪೆನಿಯೋ some thing ಕೊಟ್ಟರೆ ಅವರಿಗೆ ಇಷ್ಟವಾದ , ಅವರ ಉತ್ಪಾದನೆಗಳು ಮಾರಾಟವಾಗಲು ಸಹಾಯಕವಾಗುವ some-ಶೋಧನೆಗಳು ಲಭ್ಯ. ಇಲ್ಲಿ ಯಾರಾದರೂ ಈ ವಿಶ್ವವಿದ್ಯಾಲಯಕ್ಕೆ ಕೊಟ್ಟಿದ್ದಾರೋ ಏನೋ ಗೊತ್ತಿಲ್ಲ. ಹಾಲು ಕುಡಿಯಿರಿ, ಕುಡಿದರೆ ಒಳ್ಳೆಯದು ಎನ್ನವುದು ನಮ್ಮ ಭೂಮಿಯಷ್ಟೇ ಹಳತಾದ ಸತ್ಯ. ಅದಕ್ಕೆ ಅಲ್ಲವೇ ಮನುಷ್ಯನಿಂದ ಹಿಡಿದು ಮೃಗಗಳವರೆಗೂ ಭೂಮಿಗೆ ಉದುರಿದ ಕೂಡಲೇ ಭಗವಂತ ಹಾಲಿನ ಸರಬರಾಜನ್ನು  ಅಡೆತಡೆಯಿಲ್ಲದೆ ಮುಂದುವರೆಸಿರುವುದು?

ದಿನಕ್ಕೆ ಒಂದು ಲೋಟ ಹಾಲು ಕುಡಿದರೆ ಜ್ಞಾಪಕ ಶಕ್ತಿ ಹೆಚ್ಚುತ್ತಂತೆ. ಎಲ್ಲರೂ ಕಿವಿ ನಿಮಿರಿಸಿ ಕೇಳುವ, ಕಣ್ಣರಳಿಸಿ ನೋಡುವ ವಿಷ್ಯ ಇದು. ವಾವ್, ನನ್ನ ಮಟ್ಟಿಗೆ ಲೈಂಗಿಕ ಸಾಮರ್ಥ್ಯ ಹೆಚ್ಚಿಸಿ ಕೊಳ್ಳುವುದಕ್ಕಿಂತ ಇಂಪಾರ್ಟೆಂಟ್ ಈ ಜ್ಞಾಪಕ ಶಕ್ತಿ ವರ್ಧನೆ. ಏಕೆಂದರೆ ಜ್ಞಾಪಕ ಶಕ್ತಿ ಇಲ್ಲ ಎಂದರೆ ಲೈಂಗಿಕ ಚಟುವಟಿಕೆ ನಡೆಸುವುದನ್ನು ಮರೆತು ಬಿಡುತ್ತೇವೆ. ಕೆಲವೊಮ್ಮೆ ಹಸಿವಿನಂತೆ ಲೈಂಗಿಕ ಬಯಕೆಗಳು spontaneous ಆಗಿ ಬಂದರೂ ಬದುಕಿನಲ್ಲಿ ಒಂದು ಸ್ಟೇಜ್ ಬರುತ್ತೆ ಜ್ಞಾಪಕ ಬಂದಾಗ ದೈಹಿಕ ಸುಖ ಪಡೆಯಬೇಕು ಎನ್ನುವ ಆಸೆ. ದಿನಕ್ಕೆ ಒಂದು ಲೋಟ ಹಾಲು ಕುಡಿದರೆ ಜ್ಞಾಪಕ ಶಕ್ತಿ ಹೆಚ್ಚು, ೨೩ ರಿಂದ ೯೮ ವರ್ಷ ವಯಸ್ಸಿನ ಸುಮಾರು ೯೦೦ ‘ಎಳೆ’ಯರ ಮೇಲೆ ನಡೆಸಿದ ಸಂಶೋಧನೆಯಿಂದ ಕಂಡು ಕೊಂಡ ಅಂಶ ಇದು. ಆದರೆ ಈಗ ನಾವು ಸೇವಿಸುತ್ತಿರುವುದು – ಹಾಲಾಗಲೀ, ಸೊಪ್ಪಾಗಲೀ, ಮೊಟ್ಟೆಯಾಗಲೀ, ಮಾಂಸವಾಗಲೀ – ಆಹಾರಕ್ಕಿಂತ ಹೆಚ್ಚು ರಾಸಾಯನಿಕಗಳನ್ನು. ಗೊಬ್ಬರದಿಂದ ಶುರುವಾದ ಈ ರಾಸಾಯನಿಕಗಳ ಹಸ್ತಕ್ಷೇಪ ಸೇಬಿನ ಹಣ್ಣಿಗೆ ಮೆರುಗನ್ನು ನೀಡುವವರೆಗೆ ಬಂದು ತಲುಪಿದೆ. ತರಕಾರೀ, ಹಣ್ಣುಗಳು, ಮಾಂಸ ಇವುಗಳಿಗೆ ರಾಸಾಯನಿಕ ಸಿಂಪಡಿಸೀ, ಸಿಂಪಡಿಸೀ ಈಗ ಆಹಾರಕ್ಕೆ ಅಂಟಿಕೊಂಡ ರಸಾಯನಿಕಗಳನ್ನು ತೊಳೆದು ತೆಗೆಯಲು ಮತ್ತೊಂದು ರೀತಿಯ washing detergent ಬಂದಿದೆ. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು, ಅಲ್ಲವೇ?

ಈಗ ಮತ್ತೊಮ್ಮೆ ಹಾಲಿನ ವಿಷಯಕ್ಕೆ ಬರೋಣ. ಹಾಲು ಕುಡಿಯೋಣ, ಅದು ಹಾಲಿನ ಲಕ್ಷಣ ಹೊಂದಿದ್ದರೆ. ಅರ್ಥ? ನಮ್ಮ ದೇಶದಲ್ಲಿ ಸಿಗುವ ಹಾಲು ಹಾಲಲ್ವಂತೆ. ಅಂದ್ರೆ? ಅಂದ್ರೆ, ನಾವು ಕುಡಿಯೋ ಹಾಲಿಗೆ ಯೂರಿಯಾ, ಹಾಳೂ ಮೂಳೂ ಸೇರಿಸಿ ಕೊಡ್ತಾರಂತೆ. ಒಹ್, ಹಾಗಾದ್ರೆ ಹಾಲು ಕುಡಿದು ನಮ್ಮ ಜ್ಞಾಪಕ ಶಕ್ತಿ ವರ್ಧಿಸುವುದೂ ಬೇಡ, ಈಗ ಇರೋ ಶಕ್ತಿಯೇ ಸಾಕು ಎಂದು ಹಾಲಿಗೆ ಬೆನ್ನು ತಿರುಗಿಸಿದರೆ ಒಳ್ಳೆಯದು ಎಂದು ನನ್ನ ಒಪೀನಿಯನ್ನು.

ಒಂದು “ಲಾ” ಪ್ರಹಸನ

ಏನ್ ಲಾ…. ಏನಿಲ್ಲ ಕಣ್ಲಾ ; ಇದು ಮೊನ್ನೆ ಮೊನ್ನೆ ನಮ್ಮ ರಾಜ್ಯದಲ್ಲಿ ನಡೆದ ಗದ್ದಲದ ವಿಶ್ಲೇಷಣೆ ಮತ್ತು ಫಲಿತಾಂಶ. ಪತ್ರಕರ್ತರ, ವಕೀಲರ, ಪೊಲೀಸರ ಮಧ್ಯೆ ಜಗಳ ಕಂಡ ನಮ್ಮ ರಾಜ್ಯ ತನ್ನ ಅಪಕೀರ್ತಿಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿತು. ರಂ. ಶ್ರೀ. ಮುಗಳಿಯವರ “ಎಂಥ ನಾಡಿದು, ಎಂಥ ಕಾಡಾಯಿತೋ” ಪರಿತಾಪಕ್ಕೆ ತಕ್ಕಂತೆ ನಡೆದು ಕೊಂಡಿತು ನಮ್ಮ ಪ್ರೀತಿಯ ರಾಜ್ಯ. ಆದರೆ ಈ ಲೇಖನ ಆ ಜಗಳದ ಬಗ್ಗೆ ಅಲ್ಲ. ಇದು ಸ್ವಲ್ಪ ಬೇರೆ ತೆರನಾದುದು. ಮರುಭೂಮಿಯ ಈ “ಲಾ” ನಮ್ಮ ಮೈ ಪರಚಿಕೊಳ್ಳುವಂತೆ ಮಾಡುತ್ತದೆ. ಅಸಹಾಯಕೆಯಿಂದ ಬಸವಳಿಯುವಂತೆ ಮಾಡುತ್ತದೆ. ಯಾವುದೋ ಒಂದು ಹಿಂದಿ ಚಿತ್ರದಲ್ಲಿ ಯಕಃಶ್ಚಿತ್ ಸೊಳ್ಳೆ ನಟ ನಾನಾ ಪಾಟೇಕರ್ ನನ್ನು ನಪುಂಸಕನನ್ನಾಗಿಸಿದಂತೆ; ಸಾಲಾ, ಏಕ್ ಮಚ್ಛರ್, ಆದ್ಮಿ ಕೋ ಹಿಜಡಾ ಬನಾ ದೇತಾ ಹೈ.    

ಅರೇಬಿಕ್ ಭಾಷೆಯ “ಲಾ” ಪದದ ಅರ್ಥ “NO” ಎಂದು. ಈ ಮಾತು ಅರಬ್ ನ ಬಾಯಿಂದ ಬಿತ್ತು ಎಂದರೆ ಅದನ್ನು ಸರಿ ಪಡಿಸಲು ಯಾರಿಂದಲೂ ಸುಲಭ ಸಾಧ್ಯವಲ್ಲ. ನಮ್ಮ ಸಂವಿಧಾನಕ್ಕೆ ತಿದ್ದುಪಡಿ ಬೇಕಾದರೂ ತರಬಹುದು ಈ ಲಾ ಗೆ ತಿದ್ದುಪಡಿ ತರೋದು ಅಸಾಧ್ಯ. ಬ್ಯಾಂಕಿನಲ್ಲಿ, ಪೊಲೀಸ್ ಪೇದೆಯ ಕಯ್ಯಲ್ಲಿ, ಕಸ್ಟಮ್ಸ್ ನಲ್ಲಿ, ಕಚೇರಿಯಲ್ಲಿ, ಎಲ್ಲಿ ಹೋದರೂ ಈ ಪದದ ರುಚಿ ಆಗುತ್ತಲೇ ಇರುತ್ತದೆ. ಮೊನ್ನೆ ನನ್ನ ಮಿತ್ರರೊಬ್ಬರಿಗೆ ಆದ ಅನುಭವ ಇದು.

ದುಬೈ ನಿಂದ ರಿಯಾದ್ ವಿಮಾನ ನಿಲ್ದಾಣಕ್ಕೆ ಇಳಿದು ಕಸ್ಟಮ್ಸ್ ಚೆಕ್ ಗಾಗಿ ಸರತಿಯಲ್ಲಿ ನಿಂತರು ನನ್ನ ಮಿತ್ರರು. ಅವರ ಮುಂದೆ ಫ್ರಾನ್ಸ್ ದೇಶದ ಸೂಟು ಬೂಟು ಧರಿಸಿದ ಬಿಳಿಯ ನಿಂತಿದ್ದ. ದುಬೈ ನಿಂದ ರಿಯಾದ್ transit ಆಗಿ ಪ್ಯಾರಿಸ್ ಹೋಗುವವನಿದ್ದ ಈ ಫ್ರೆಂಚ್ ಪ್ರಜೆ. ಕಸ್ಟಮ್ಸ್ ನಲ್ಲಿ ಅವನ ಸೂಟ್ ಕೇಸನ್ನು ಪರಿಶೀಲಿಸಿದಾಗ ದೊಡ್ಡ ಬಾಟಲಿಯೊಂದು ಅಧಿಕಾರಿಯ ಕಣ್ಣಿಗೆ ಬಿತ್ತು. ಬೆಲೆಬಾಳುವ ಬ್ರಾಂಡಿ ಬಾಟಲಿ. ಬಾಟಲಿಯನ್ನು ಕೈಯ್ಯಲ್ಲಿ ಹಿಡಿದು ಹೊರಳಿಸುತ್ತಾ ಹುಬ್ಬೇರಿಸಿದ ಕಸ್ಟಮ್ಸ್ ಆಫೀಸರ್. ಬಿಳಿಯ ಕಣ್ಣುಗಳನ್ನು ರೋಲ್ ಮಾಡುತ್ತಾ nonchalant ಆಗಿ ಭುಜ ಹಾರಿಸಿದ. clash of culture. ಒಬ್ಬನಿಗೆ ಮದ್ಯ ನಿಷಿದ್ಧ, ಎದುರು ನಿಂತವನಿಗೆ way of life. ಮದ್ಯ ನಮ್ಮ ದೇಶದಲ್ಲಿ ನಿಷಿದ್ಧ ಎಂದು ಆಫೀಸರ್ ಹೇಳಿದಾಗ ಬಿಳಿಯ ಹೇಳಿದ, ನನಗೆ ಗೊತ್ತು, ಆದರೆ ನಾನು ದುಬೈ ನಿಂದ ಬರುತ್ತಿದ್ದೇನೆ, ನನ್ನ ದೇಶಕ್ಕೆ ಹೋಗುವ ದಾರಿಯಲ್ಲಿ ರಿಯಾದ್ ನಲ್ಲಿ ಇಳಿದಿದ್ದೇನೆ ನನ್ನ ವಿಮಾನ ಹೊರಡುವ ತನಕ ಎಂದ. ಆಫೀಸರ್ ಹೇಳಿದ “ಲಾ”. ಬಿಳಿಯ ಹೇಳಿದ ನಾನು ನಿನ್ನ ದೇಶದಲ್ಲಿ ವಾಸಿಸಲೋ, ನೌಕರಿ ಮಾಡಲೋ ಬಂದಿಲ್ಲ, ಟ್ರಾನ್ಸಿಟ್ ಮೇಲೆ ಬಂದಿದ್ದೇನೆ ಎಂದು ವಾದಿಸಿದ. ಆಫೀಸರ್ ಮತ್ತೊಮ್ಮೆ ಗಿಳಿಯಂತೆ ಉಲಿದ “ಲಾ”. ಸಹನೆಯ ಎಲ್ಲೆ ಪರೀಕ್ಷಿಸುತ್ತಿದ್ದ ಆಫೀಸರ್ ನನ್ನು ದುರುಗುಟ್ಟಿ ನೋಡಿದ ಬಿಳಿಯ ಸರಿ, ಅದನ್ನು ನೀನೇ ಇಟ್ಟು ಕೋ, ನನ್ನನ್ನು ಹೋಗಲು ಬಿಡು ಎಂದ. ಅದಕ್ಕೂ ಬಂತು ಉತ್ತರ ‘ಲಾ’. “ನನ್ನ ಧರ್ಮದಲ್ಲಿ ನಾನು ಕುಡಿಯುವಂತಿಲ್ಲ” ಎಂದ ಆಫೀಸರ್. ಅದಕ್ಕೆ ಬಿಳಿಯ ಹೇಳಿದ ನಿನಗೆ ಏನು ಬೇಕೋ ಅದು ಮಾಡು, ಗಾರ್ಬೇಜ್ ಗೆ ಬೇಕಾದರೂ ಎಸೆ, ನನ್ನನ್ನು ಹೋಗಲು ಕೊಡು ಎಂದ ಹತಾಶೆಯಿಂದ. ಆಫೀಸರ್ ಹೇಳಿದ ‘ಲಾ’…..ನಾನು ಈ ಬಾಟಲಿಯನ್ನು ನನ್ನ ಹತ್ತಿರ ಇಟ್ಟುಕೊಂಡು ನಿನ್ನನ್ನು ಕಳಿಸಿದರೆ ನಾನದನ್ನು ಕುಡಿಯುತ್ತೇನೆ ಎಂದು ನೀನು ತಿಳಿಯಬಹುದು. ಪರಚಿಕೊಳ್ಳುತ್ತಾ  ಬಿಳಿಯ ಕೇಳಿದ ನಾನೀಗ ಏನು ಮಾಡಬೇಕು…………? ಆಫೀಸರ್ ಹೇಳಿದ ನೀನು ನನ್ನ ಜೊತೆ ಬರಬೇಕು. ಎಲ್ಲಿಗೆ ಎಂದ ಬಿಳಿಯ. ಟಾಯ್ಲೆಟ್ಟಿಗೆ ಎಂದು ಹೇಳುತ್ತಾ ಟಾಯ್ಲೆಟ್ ಕಡೆ ನಡೆದ ಆಫೀಸರ್. ಬೇರೆ ದಾರಿ ಕಾಣದೇ ಬಿಳಿಯ ಅವನನ್ನು ಹಿಂಬಾಲಿಸಿದ. ಸಾರಾಯಿ ಬಾಟಲಿಯ ಕಾರ್ಕ್ ತೆಗೆದು ಗಟ ಗಟ, ಗಟ ಗಟ ಎಂದು ಆಫೀಸರ್ ಟಾಯ್ಲೆಟ್ ಗುಂಡಿಯ ಗಂಟಲಿಗೆ ಸುರಿದ ಮದ್ಯ. ಬರಿದಾದ ಬಾಟಲಿಯನ್ನು ನುಚ್ಚು ನೂರು ಮಾಡಿ ಅವನ ಕಡೆಗೆ ಒಂದು ಮಂದಹಾಸ ಬೀರಿ ನಡೆದ. ಕ್ಷಣ ಕಾಲ ದಂಗಾಗಿ ನಿಂತು, ಸಾವರಿಸಿಕೊಂಡು ತನ್ನ ಸಾಮಾನುಗಳನ್ನು ಸೂಟ್ ಕೇಸಿನಲ್ಲಿ ತುಂಬಿಸಿ ಕೊಂಡು ಜಾಗ ಖಾಲಿ ಮಾಡಿದ ನತದೃಷ್ಟ ಫ್ರೆಂಚ್ ಪ್ರಜೆ.

ಚಿತ್ರ ಏನು?: ಚಿತ್ರದಲ್ಲಿರುವುದು “ಲಾ” ಕಾರದ ಕಲಿಗ್ರಫಿ (caligraphy) ರೂಪ. ಕಲಿಗ್ರಫಿ ಎಂದರೆ ಸುಂದರ ಬರಹ ಅಂತ. ಅರೇಬಿಕ್ ಭಾಷೆ cursive ಆಗಿರುವುದರ ಕಾರಣ ಕಲಾತ್ಮಕವಾಗಿ  ಹೇಗೆ ಬೇಕಾದರೂ, ಯಾವ ರೂಪದಲ್ಲೂ ಬರೆಯಬಹುದು. ಇದೊಂದು ಜನಪ್ರಿಯ ಕಲೆ. ಕಲಿಗ್ರಫಿ ಗಾಗಿ ವಿಶೇಷ ಪೆನ್ನುಗಳು ಬೇಕಾಗುತ್ತವೆ, ಅದರೊಂದಿಗೆ ಕಲಾವಂತಿಕೆ ಮತ್ತು ಸಂಯಮ ಕೂಡಾ. 

ಚಿತ್ರ ಕೃಪೆ: http://www.oweis.com

ಪ್ರತಿಕ್ರಿಯೆ ಬೇಡ

  • ಕನಿಷ್ಠ  ದಿನಕ್ಕೊಮ್ಮೆ ಪೋಸ್ಟು ಪೋಸ್ಟು ಎಂದು ಹೇಗ್ರೀ ಕೂಗೋದು? ಈಗ ಎಲ್ಲಿದೆ ಪೋಸ್ಟು ಗೀಸ್ಟು, ಈಗ ಎಲ್ಲಾ ಮೇಲು ಗೀಲು ಎಂದಿರಾ? ಪೋಸ್ಟ್ ಅಂದಿದ್ದು ವರ್ಡ್ ಪ್ರೆಸ್ ಬ್ಲಾಗ್ ತಾಣಕ್ಕೆ ನಾವು ಬರೆದು ಪ್ರಕಟಿಸುವ ಬರಹದ ಬಗ್ಗೆ. ವರ್ಡ್ ಪ್ರೆಸ್ ತಾಣವನ್ನು ಹೊಕ್ಕ ಕೂಡಲೇ freshly pressed ವಿಭಾಗದಲ್ಲಿ ಇರುವ ಲೇಖನದ ಮೇಲೆ ಕಣ್ಣಾಡಿಸಿ ಪ್ರಕಟವಾದ ಲೇಖನಗಳಿಗೆ ಬರುವ ಸ್ವಾರಸ್ಯಕರ ಪ್ರತಿಕ್ರಿಯೆ ಓದುವುದು ನನ್ನ ಅಭ್ಯಾಸ. ಕೇಕ್ ಹೇಗೇ ಮಾಡೋದು ಎನ್ನುವುದರಿಂದ ಹಿಡಿದು ವಾಕ್ ಹೇಗೇ ಮಾಡೋದು, ಪೇರೆಂಟಲ್ (ಪಾಲಕತ್ವ?) ಬಗ್ಗೆ, ಪ್ರವಾಸದ ಬಗ್ಗೆ, ಬರೆಯಲು ಏನೂ ಹೊಳೆಯದಾದಾಗ ವಿಷಯ ಕಂಡು ಕೊಳ್ಳುವುದು ಹೇಗೆ………ಹೀಗೆ ಬ್ಲಾಗ್ ಪೋಸ್ಟ್ ಗಳ ಸುಗ್ಗಿ ಕಾಣಲು ಸಿಗುತ್ತದೆ. ಒಂದೊಂದು ಪೋಸ್ಟ್ ಗೂ ನೂರಾರು ಪ್ರತಿಕ್ರಿಯೆಗಳು. ವಿಷಯ ಎಷ್ಟೇ trivial ಆಗಿರಲಿ ಆಸ್ಥೆಯಿಂದ ತಮ್ಮ ಅಭಿಪ್ರಾಯ ಪ್ರಕಟಿಸುತ್ತಾರೆ ಓದುಗರು. ಅದೇ ವೇಳೆ ನಮ್ಮ ಕನ್ನಡ ತಾಣಗಳಲ್ಲಿ ಬರುವ ಪ್ರತಿಕ್ರಿಯೆಗಳ ಕಡೆ ಸ್ವಲ್ಪ ನೋಡಿ. ಪ್ರತಿಕ್ರಿಯೆ ಗಳಿಲ್ಲದೆ ಆಹಾರ, ಪೋಷಕಾಂಶ ಇಲ್ಲದೆ, ಕೃಶರಾಗಿ  ನರಳುವ ಸೊಮಾಲಿಯಾ ದೇಶದ ಮಕ್ಕಳ ಥರ ಕಾಣುತ್ತದೆ ಬ್ಲಾಗ್ ಪೋಸ್ಟು. ಈ ಅಸಡ್ಡೆಗೆ, indifference ಗೆ ಕಾರಣವಾದರೂ ಏನಿರಬಹುದು? ಥಟ್ಟನೆ ಸೋಮಾರಿತನ ಕಾರಣ ಎಂದು ತೋರಿದರೂ ಕೆಲವೊಮ್ಮೆ ಮತ್ತೊಂದು ಕಾರಣ ತಲೆಗೆ ತೂರಿ ಕೊಳ್ಳುತ್ತದೆ. ಅದೇನೆಂದರೆ ಓದಿದ ಬರಹಕ್ಕೆ   ಪ್ರತಿಕ್ರಯಿಸಬೇಕೆಂದರೆ ಕೀಲಿ ಮಣೆ ಕುಟ್ಟಲೇ ಬೇಕಲ್ಲವೇ? ಹೀಗೆ ಪ್ರತೀ ಬರಹಕ್ಕೂ ಕೀಲಿಗಳನ್ನು ಕುಟ್ಟುತ್ತಾ ಕೂತರೆ ಕೀಲಿಗಳು ಕೀಲು ಬಿಟ್ಟುಕೊಂಡು ಉದುರಿದರೆ? ಕಂಪ್ಯೂಟರ್ ಹತ್ತಾರು ಸಾವಿರ ಬೆಲೆಬಾಳುವ ಉಪಕರಣ ತಾನೇ? ಸುಮ್ಮ ಸುಮ್ಮನೆ ಅದನ್ನು ಹಾಳುಗೆಡವಲು ಸಾಧ್ಯವೇ? ನಿಮಗೆ ಗೊತ್ತೇ ಇರಬಹುದು, ಟೀವೀ ಬಂದಾಗ ಅದರೊಂದಿಗೆ ಬರುವ ರಿಮೋಟ್ ಕಂಟ್ರೋಲ್ ಉಪಕರಣವನ್ನು ನಾವು ಜೋಪಾನ ಮಾಡೋ ರೀತಿ. ಕೆಲವರು ಪ್ಲಾಸ್ಟಿಕ್ ಕವರ್ ಹೊದಿಸಿದರೆ ಮತ್ತೆ ಕೆಲವರು ಪ್ಲಾಸ್ಟಿಕ್ ಕವಚ ಹಾಕುತ್ತಾರೆ, ಒತ್ತಿ ಒತ್ತಿ ಎಲ್ಲಿ ಬಟನ್ನುಗಳು ಕಿತ್ತು ಬರುತ್ತೋ ಎಂದು. ಈ ತೆರನಾದ ಕಾರಣವೇನಾದರೂ ಇರಬಹುದೇ ಪ್ರತಿಕ್ರಿಯೆಗಳ ಬರಗಾಲಕ್ಕೆ? ಕೆಲಸವಿಲ್ಲದವನು ಏನೋ ಬರೆದು ಹಾಕಿದ್ದಕ್ಕೆ ನಾವೇಕೆ ಪ್ರತಿಕ್ರಯಿಸಿ ನಮ್ಮ ಕೀ ಬೋರ್ಡ್ ಹಾಳುಗೆಡವ ಬೇಕು ಎನ್ನುವ ಧೋರಣೆಯೋ? ಹೊಸತಾಗಿ ಬರಹ ಕೈಗೆತ್ತಿ ಕೊಂಡು ಈ ರೀತಿಯ ಓದುಗ ಸಮೂಹದ ಅಸಡ್ಡೆಗೆ expose ಆದನೋ, ಅವನ ಗತಿ ದೇವರಿಗೇ ಪ್ರೀತಿ. ಬರಹ ನೂ ಬೇಡ ಏನೂ ಬೇಡ, ಇದು ನನ್ನ ಕೈಗೆ ಹೇಳಿಸಿದ ಕೆಲಸ ಅಲ್ಲ ಎಂದು ಮುದುಡಿ ಕೊಳ್ಳುತ್ತಾನೆ. ಆದರೆ ನನ್ನಂಥ ದಪ್ಪ ಚರ್ಮದ ಜನರಿಗೆ ಓದುಗರ “ಅಸಡ್ಡೆ” ಯೇ ಒಂದು ರೀತಿಯ ಮೂಕಿ (ಮೂಕಿ ಟಾಕಿ ಗೊತ್ತಲ್ಲ?) ಪ್ರತಿಕ್ರಿಯೆ.
  • ನನ್ನ “ಹಳೇ ಸೇತುವೆ” ಬ್ಲಾಗ್ ಗೆ ಇದುವರೆಗೆ ಭೇಟಿ ಕೊಟ್ಟವರ ಸಂಖ್ಯೆ ೨೦,೦೦೦ ದಾಟಿದ “ಅವಿಸ್ಮರಣೀಯ ಅನುಭವ” ಕ್ಕೆ ಅರ್ಪಣೆ ಈ ಲಘು ಬರಹ. ಎಲ್ಲರಿಗೂ ವಂದನೆಗಳು.
  • ಸೂಚನೆ: ಬೇಡ, ಬೇಡ, ಪ್ರತಿಕ್ರಿಯೆ ಬೇಡ, ನೀವು ಓದುವಾಗ ನಿಮ್ಮ ಕಣ್ಣುಗಳಲ್ಲೇ ನನಗೆ ಕಾಣುತ್ತಿದೆ ಶುಭಾಶಯಗಳು ಎನ್ನುವ ಹಾರೈಕೆ.                 

ವ್ಯಾಟಿಕನ್ ನಿಯಮ

ಇತ್ತೀಚೆಗೆ ಕ್ರೈಸ್ತ ಧರ್ಮದ ಜಗದ್ಗುರು ಪೋಪ್ ರವರನ್ನು ಭೇಟಿಯಾಗಲು ಬ್ರಿಟನ್ ದೇಶದ ಕೆಲವು ಮಂತ್ರಿಗಳು ಹೋಗಿದ್ದರು. ಪೋಪ್ ಒಬ್ಬ ವಿಶ್ವದ ಗೌರವಾನ್ವಿತ ಮತ್ತು ಆದರಿಸಲ್ಪಡುವ ಧರ್ಮಗುರುಗಳು, ಹಾಗೆಯೇ head of state ಸ್ಥಾನ ಮಾನವನ್ನು ಹೊಂದಿರುವವರು ಸಹ. ಇವರನ್ನು ಭೇಟಿಯಾಗಲು ಮಂತ್ರಿ ಮಹೋದಯರು, ಗಣ್ಯರು ಹೋಗುವುದು ಸಹಜವೇ. contraception (ಗರ್ಭನಿರೋಧಕ) ಬಳಕೆಯಿಂದ ಹಿಡಿದು climate change ವರೆಗೆ ಚರ್ಚಿಸಲು ಪೋಪ್ ರನ್ನು ಭೇಟಿಯಾಗುತ್ತಾರೆ ಜನ. ಪೋಪ್ ರನ್ನು ಭೇಟಿಯಾದ ಬ್ರಿಟಿಷ ತಂಡದ ಕುರಿತು ನನ್ನ ಆಸಕ್ತಿ ಏನೆಂದರೆ, ತಂಡದಲ್ಲಿ ‘ಸಯೀದ ಹುಸೇನ್ ವಾರ್ಸಿ’ ಎನ್ನುವ ಮುಸ್ಲಿಂ ಮಹಿಳೆ ಸಹ ಇದ್ದರು. ಈಕೆ ಬ್ರಿಟಿಷ್ ಮಂತ್ರಿಮಂಡಲದ ಏಕೈಕ ಮುಸ್ಲಿಂ ಮಹಿಳಾ ಸಚಿವೆ. ವಾರ್ಸಿ ಪೋಪ್ ರನ್ನು ಕಾಣಲು ಹೋಗುವಾಗ vatican protocol ಪ್ರಕಾರ ಕಪ್ಪು ವಸ್ತ್ರ ಮತ್ತು ಸ್ಕಾರ್ಫ್ ಧರಿಸಿದ್ದರು. ಇದು ವಿಶ್ವದ ಅತಿ ಚಿಕ್ಕ ದೇಶವಾದ ಸುಮಾರು ೧೧೦ ಎಕರೆ ವಿಸ್ತೀರ್ಣದ ವ್ಯಾಟಿಕನ್ ನ ನಿಯಮ.

ವ್ಯಾಟಿಕನ್ ಕ್ರೈಸ್ತರ ಅತ್ಯಂತ ಪವಿತ್ರ ಕ್ಷೇತ್ರ. ತೋಚಿದ ರೀತಿಯ ಉಡುಗೆ ತೊಡುಗೆ ಸಲ್ಲದು. ಶಿಷ್ಟಾಚಾರಗಳು ಎಲ್ಲೆಲ್ಲಿ ಅವಶ್ಯಕವೋ ಅವುಗಳನ್ನ ಗೌರವಿಸಿ, ಅನುಸರಿಸಬೇಕು. ಈ ತೆರನಾದ ನಿಯಮಗಳು ಯಾವುದೇ ಸಮಾಜ ಅಥವಾ ಸಂಸ್ಕೃತಿಗಳಲ್ಲಿದ್ದರೆ ಅವುಗಳಿಗೆ ಬೇರೆಯೇ ತೆರನಾದ ಅರ್ಥ ಕೊಟ್ಟು ಟೀಕಿಸಬಾರದು. ನಮಗೊಂದು ನ್ಯಾಯ, ಪರರಿಗೊಂದು ನ್ಯಾಯ, ಈ ಬೇಧ ಭಾವ ಉದ್ಭವಿಸಿದಾಗ ಸಹಜವಾಗಿಯೇ ಸಂಘರ್ಷಕ್ಕೆ ಹಾದಿ ಮಾಡಿ ಕೊಡುತ್ತದೆ.

ಕ್ರೈಸ್ತರ ಪವಿತ್ರ ಕ್ಷೇತ್ರ ದಂತೆಯೇ ಇಸ್ಲಾಮಿನ ಎರಡು ಪವಿತ್ರ ಕ್ಷೇತ್ರ ಗಳಾದ ಮಕ್ಕಾ ಮತ್ತು ಮದೀನಾ ನಗರಗಳು ಸೌದಿ ಅರೇಬಿಯಾದಲ್ಲಿವೆ. ವಿಶೇಷವೇನೆಂದರೆ ಕೇವಲ ಮಕ್ಕಾ, ಮದೀನ ಮಾತ್ರ ಪವಿತ್ರ ನಗರಗಳಲ್ಲ, ಬದಲಿಗೆ ಇಡೀ ಸೌದಿ ಅರೇಬಿಯಾ ದೇಶವೇ ಇಸ್ಲಾಮಿನ ಪುಣ್ಯ ಭೂಮಿ. ಹಾಗೆಂದು ಮುಸ್ಲಿಂ ವಿಧ್ವಾಂಸರ ಅಭಿಪ್ರಾಯವೂ ಹೌದು. ಮಕ್ಕಾ, ಮದೀನ ನಗರಗಳಿಗೆ ಮುಸ್ಲಿಮೇತರರು ಬರುವ ಹಾಗಿಲ್ಲ, ಹಾಗೆಯೇ ಸೌದಿ ಅರೇಬಿಯಾ ದೇಶಕ್ಕೆ ಬರುವವರೂ ವಸ್ತ್ರದ ವಿಷಯದಲ್ಲಿ modesty ತೋರಿಸಬೇಕು. ಮಹಿಳೆಯರು ನೀಳ, ಕಪ್ಪು ಬಟ್ಟೆ ಧರಿಸಬೇಕು. ಇದಕ್ಕೆ ಹಿಜಾಬ್ ಎನ್ನುತ್ತಾರೆ. ಸ್ವಾರಸ್ಯವೇನೆಂದರೆ ವ್ಯಾಟಿಕನ್ ವಿಷಯದಲ್ಲಿ ತೋರಿಸುವ ಸಜ್ಜನಿಕೆ ಮುಸ್ಲಿಂ ಧರ್ಮೀಯ ಆಚರಣೆಗೆ ಇಲ್ಲದಿರುವುದು. ಸೌದಿ ಅರೇಬಿಯಾದ ಉಡುಗೆ ಮತ್ತು ಇತರೆ ನಿಯಮಗಳ ಬಗ್ಗೆ ಟೀಕೆಗಳು ಕೇಳಿ ಬರುತ್ತಲೇ ಇರುತ್ತವೆ.

ಭಾವನೆಗಳನ್ನು ಮನ್ನಿಸುವ ಔದಾರ್ಯ ಎಲ್ಲರಿಗೂ ಏಕೆ ಲಭ್ಯವಲ್ಲ ಎನ್ನುವುದು ಒಂದು ದೊಡ್ಡ ಪ್ರಶ್ನೆ.

ಋತು ಗಾನ

ಋತು ಚಕ್ರ ಒಂದು ರೀತಿಯ ರಾಕೆಟ್ ಸೈನ್ಸ್ ಕೆಲವರಿಗೆ. ಒಬ್ಬ ಗಂಡು ಋತು ಚಕ್ರದ ಬಗ್ಗೆ ಬರೆದಾಗ ಸಹಜವಾಗಿಯೇ ಹುಬ್ಬುಗಳು ಮೇಲೇರುತ್ತವೆ. ಏಕೆಂದರೆ ಇದು ಪುರುಷರ domain ಅಲ್ಲ. writer’s block ನಿಂದ ಹೊರಬರಲು ವಿಷಯವೊಂದನ್ನು ಹುಡುಕುತ್ತಿದ್ದಾಗ ಹೊಳೆಯಿತೀ ವಿಷಯ, ಹಳೇ ಲಾಪ್ ಟಾಪ್ ಬದಲಿಸಿ ಮೊನ್ನೆ ತಾನೇ ಕೊಂಡ ಹೊಸ ಅತಿ ತೆಳುವಾದ “ಅಲ್ಟ್ರಾ ಬುಕ್’ ಲಾಪ್ ಟಾಪ್ ನಿಂದ ಹೊರಹೊಮ್ಮಿದ ಲೇಖನ ಓದಿ.

ನಾನು ಬೆಂಗಳೂರಿನಲ್ಲಿ ಮೆಡಿಕಲ್ ಟ್ರಾನ್ಸ್ ಕ್ರಿಪ್ಶನ್ ಮಾಡುತ್ತಿರುವಾಗ ಟ್ರೈನರ್ ಒಬ್ಬರು ಅಮೇರಿಕನ್ ಮಹಿಳೆ. ಆಕೆ human anatomy ವಿಷಯ ಕಲಿಸುವಾಗ ಋತು ಚಕ್ರದ ವಿಷಯ ಬಂತು. ಕೆಣಕಲೆಂದೇ ಏನೋ ಹುಡುಗರನ್ನು ಒಬ್ಬೊಬ್ಬರಾಗಿ ಎಬ್ಬಿಸಿ you know how long menstruation lasts ಎಂದು ಕೇಳಿದಾಗ ಇಡೀ ತರಗತಿಯೇ ನಗೆಗಡಲಲ್ಲಿ ಮುಳುಗುವ ಉತ್ತರ ಬರುತ್ತಿತ್ತು. ಒಬ್ಬ ಹತ್ತು ದಿನ ಎಂದರೆ, ಮತ್ತೊಬ್ಬ ಇನ್ನೂ ಮುಂದಕ್ಕೆ ಹೋಗಿ ಆರು ತಿಂಗಳು ಎಂದು ಬಿಟ್ಟ. ಆಕೆ ನಗುತ್ತಾ ಮಹಿಳೆಯರ ಈ ಮಾಸಿಕ ವಿದ್ಯಮಾನವನ್ನು ವಿವರಿಸಿ knives fly in the kitchen and this is the time guys have to leave town ಎಂದು ಹೇಳಿದಾಗ ಹೆಣ್ಣು ಮಕ್ಕಳು ಗಹಗಹಿಸಿ ನಕ್ಕಿದ್ದರು.

ನಾನು ಚಿಕ್ಕವನಿದ್ದಾಗ ಕೆಲವರು ಹೇಳಿದ್ದು ಕೇಳಿದ್ದೇನೆ, ಅವಳು ದೊಡ್ಡವಳಾದಳು ಎಂದು. ನಿನ್ನೆ ನಾನು ಹೇಗೆ ನೋಡಿದ್ದೇನೋ ಹಾಗೆಯೇ ಇದ್ದಾಳಲ್ಲಾ ಇವಳು, ಮತ್ತೆ ದೊಡ್ಡವಳಾದಳು ಎಂದರೆ ಏನರ್ಥ ಎನ್ನುವ ನನ್ನ ಹುಡುಗು ಜಿಜ್ಞಾಸೆಗೆ ಉತ್ತರ ಸಿಕ್ಕಿರಲಿಲ್ಲ. ಈಗಿನ ಥರ ಉತ್ತರ ಕೊಡುವಷ್ಟು ಬೆಳೆದಿರಲಿಲ್ಲ ಸಮಾಜ ಆಗ.

ಸೌದಿ ಅರೇಬಿಯಕ್ಕೆ ಬಂದಾಗ ಇಲ್ಲಿ ಕಾಣುವುದೆಲ್ಲಾ ಹೊಸತು ನನಗೆ. ಒಮ್ಮೆ ಒಂದು ಮನೆಯ ಮೇಲೆ ಸೌದಿ ದೇಶದ ಧ್ವಜ ಹಾರಿದ್ದನ್ನು ಕಂಡೆ. ನಮ್ಮ ದೇಶದಲ್ಲಿ ಮನೆಗಳ ಮೇಲೆ, ಅಲ್ಲಿ ಇಲ್ಲಿ ಎಂದು ಬಾವುಟ ಹಾರಿಸುವ ಹಾಗಿಲ್ಲವಲ್ಲ. ಹಾಗಾಗಿ ಕುತೂಹಲದಿಂದ ಒಬ್ಬ ಶ್ರೀಲಂಕೆಯ ವ್ಯಕ್ತಿಯ ಹತ್ತಿರ ಕೇಳಿದಾಗ ಆತ ಹೇಳಿದ ಆ ಮನೆಯ ಹುಡುಗಿ ವಯಸ್ಸಿಗೆ ಬಂದಿದ್ದಾಳೆ, ಅದನ್ನು ತಿಳಿಸುವುವ ಉದ್ದೇಶದಿಂದ ಬಾವುಟ ಹಾರಿಸುತ್ತಾರೆ ಎಂದಿದ್ದ ಕುಚೋದ್ಯಭರಿತ ಹಾಸ್ಯದ ಯಾವುದೇ ಸುಳಿವನ್ನೂ ಕೊಡದೆ. ನಮ್ಮ ದೇಶದಲ್ಲಿ ಕೆಲವರು ಮನೆಯ ಜಗುಲಿಯ ಸುತ್ತ ಒಂದು ಬೆಡ್ ಶೀಟ್ ಮರೆ ಮಾಡಿ ಅಲ್ಲಿ ಹುಡಗಿಯನ್ನು ಕೂರಿಸುವುದನ್ನು ನಾನು ನೋಡಿದ್ದೇನೆ. ಇನ್ನೂ ಒಂದು ಸಮುದಾಯದವರು ಚಪ್ಪರ ಹಾಕಿ ಹುಡುಗಿ ಸಿಂಗರಿಸಿ ಯನ್ನು ಕೂರಿಸುತ್ತಾರೆ. ಈಗ ಇದೆಲ್ಲಾ ಬದಲಾಗಿರಬೇಕು. ಇದು ಬದಲಾಗಿದೆಯೇ, ಇಲ್ಲವೇ ಎಂದು ಗಮನಿಸಲೇ ಬೇಕಾದ, ಕುತೂಹಲ ಭರಿತ ವಿಷಯವೂ ಅಲ್ಲ ಅನ್ನಿ ಇದು.

ಏನೇ ಇರಲಿ, ಮಹಿಳೆಯರಿಗೆ ಆಗುವ ಈ ಜೈವಿಕ ಬದಲಾವಣೆ ವಿವಿಧ ಸಮಾಜಗಳಲ್ಲಿ ವಿವಿಧ ರೂಪಗಳಲ್ಲಿ ಕಾಣಿಸುತ್ತದೆ. ಕ್ರೈಸ್ತರ ಹಳೆ ಒಡಂಬಡಿಕೆ ಪ್ರಕಾರ ಋತು ಚಕ್ರ ಅರ್ಧ ಸಾವಿನಂತೆ. ಪವಿತ್ರ ವಾದುದನ್ನು ಅಪವಿತ್ರ ಗೊಳಿಸುತ್ತದೆ ಋತು ಚಕ್ರ ಎನ್ನುವ ಅಭಿಪ್ರಾಯದೊಂದಿಗೆ ಅದು ಒಂದು ಶಾಪ ಎನ್ನುವ ಅಭಿಪ್ರಾಯ ಹಳೆ ಒಡಂಬಡಿಕೆ ಕಾಲದ ಜನರದ್ದಾಗಿತ್ತು. ಇಥಿಯೋಪಿಯಾ ದೇಶದಲ್ಲಿ ಈ ಅವಸ್ಥೆಯಲ್ಲಿರುವ ಹೆಣ್ಣು ಮಕ್ಕಳು ಅದಕ್ಕೆಂದೇ ನಿರ್ಮಿಸಲಾಗಿದ್ದ ಗುಡಿಸಿಲಿಗೆ ಹೋಗಿ ವಾಸವಾಗುವ ಪದ್ಧತಿ ಇದೆಯಂತೆ. ದೇವತೆಯರನ್ನು ಆರಾಧಿಸುವ ಪ್ರಾಚೀನ ಸಮಾಜಗಳಲ್ಲಿ ಋತು ಚಕ್ರ ಒಂದು ಪವಿತ್ರ ಕ್ರಿಯೆ. ಹಾಗೂ ತಿಂಗಳಿನ ಆ ಅವಧಿಯಲ್ಲಿ ಮಹಿಳೆ ಹೆಚ್ಚು ಬಲಶಾಲೀ ಎನ್ನುವ ಅಭಿಪ್ರಾಯವೂ ಇತ್ತು. ಅಷ್ಟೇ ಅಲ್ಲ ಈ ಅವಧಿಯಲ್ಲಿ ಮಹಿಳೆ ಗದ್ದೆ ಹೊಲದಲ್ಲಿ ಓಡಾಡಿದರೆ ಬೆಳೆ ಚೆನ್ನಾಗಿ ಆಗುವ ನಂಬಿಕೆ ಇತ್ತಂತೆ.

 ಇಸ್ಲಾಮಿನಲ್ಲಿ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಇದೊಂದು ನೈಸರ್ಗಿಕ ಪ್ರಕ್ರಿಯೆ, ಈ ಸಮಯದಲ್ಲಿ ಮಹಿಳೆ ನಮಾಜ್ ನಿರ್ವಹಿಸುವಂತಿಲ್ಲ , ಪವಿತ್ರ ಕುರಾನ್ ಪಠಿಸುವಂತಿಲ್ಲ, ವೃತಾಚಾರಣೆ ಪಾಲಿಸುವಂತಿಲ್ಲ. ಒಮ್ಮೆ ಪ್ರವಾದಿಗಳು ತಮ್ಮ ಪತ್ನಿಗೆ ನೀರು ಕೊಡೆಂದು ಕೇಳಿದಾಗ, ನಾನು ಋತುಮತಿ ಯಾಗಿದ್ದೇನೆ ಎನ್ನುವ ಉತ್ತರ ಬಂತು. ಆಗ ಪ್ರವಾದಿಗಳು ಕೇಳಿದರು, ಅದರಲ್ಲೇನು ತಪ್ಪು? ಋತು ಚಕ್ರ ಆಗೋದು ಬಿಡೋದು ನಿನ್ನ ಕೈಯಲ್ಲಿಲ್ಲವಲ್ಲ ಎಂದು ಉತ್ತರಿಸಿದ್ದರು. ಅಂದರೆ ಇದರ ಬಗ್ಗೆ ತಲೆ ಕೆಡಿಸಿ ಕೊಳ್ಳದೆ ದೈನಂದಿನ ಚಟುವಟಿಕೆ ಸಾಂಗವಾಗಿ ನಡೆಸಬಹುದು ಎಂದಾಗಿತ್ತು ಪ್ರವಾದಿಗಳ ಅಭಿಪ್ರಾಯ.

ಸ್ಟೀವ್ ಜಾಬ್ಸ್ ರವರ ಆಪಲ್ ಕಂಪೆನಿ ಮೊದಲ ಬಾರಿಗೆ i pad ತಯಾರಿಸಿ ಅದಕ್ಕೆ ಹೆಸರೇನೆಂದು ಇಡಬೇಕು ಎಂದು i pad ಒಳಗೊಂಡು ಒಂದೆರಡು ಹೆಸರುಗಳನ್ನು ಕೊಟ್ಟು ಜನರ ಅಭಿಪ್ರಾಯ ನೋಡಿದಾಗ ಬಹಳ ಜನ ಹೇಳಿದ್ದು i pad ಹೆಸರು ಬೇಡ, ಇದು ಸ್ತ್ರೀಯರ ಋತುಚಕ್ರವನ್ನು ನೆನಪಿಸುತ್ತದೆ, kotex pad, ‘always ‘ pad ಗಳ ತೆರನಾದ ಹೆಸರು ಬೇಡ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದರು. ಆದರೂ ಆಪಲ್ ಸಂಸ್ಥೆ ಇವುಗಳನ್ನು ಕಿವಿಗೆ ಹಾಕಿ ಕೊಳ್ಳದೆ ವಿಶ್ವಕ್ಕೆ ನೀಡಿದರು i pad . ಎಲ್ಲರೊಳಗೊಂದಾಗು ಎನ್ನುವ ಮಾತಿನಲ್ಲಿ ಆಪಲ್ ಗೆ ನಂಬಿಕೆಯಿಲ್ಲ. ಸ್ವಲ್ಪ ಸರಿದು ನಿಂತು ಎಲ್ಲರಿಗಿಂತ ಭಿನ್ನವಾಗಿ ಯೋಚಿಸಿ ಕಾಲಿಡುತ್ತಾರೆ ಆಪಲ್ ಜನ. ಹಾಗಾಗಿ ಅಷ್ಟೊಂದು ಯಶಸ್ವಿ ಈ ಕಂಪೆನಿ.

ಈ ಲೇಖನ ಬರೆಯುತ್ತಿರುವಾಗ ನನ್ನ ಪತ್ನಿ ಬಂದು ಕೇಳಿದಳು, ಬೆಳಗ್ಗಿನಿಂದ ಲಾಪ್ ಟಾಪ್ ಅನ್ನ ಅಂಟಿಸಿ ಕೊಂಡು ಕೂತಿದ್ದೀರಾ (ಶುಕ್ರವಾರ ರಜೆ ಯಾದ್ದರಿಂದ), ಸಾಕು ಏಳಿ ಈಗ ಎಂದಾಗ ನಾನು, ತಡಿಯೇ ಋತು ಚಕ್ರದ ಬಗ್ಗೆ ಬರೆಯುತ್ತಿದ್ದೇನೆ ಎಂದಿದ್ದೇ ತಡ, ಓಹೋ, ನಿಮಗೂ ಶುರು ಆಗ್ಬಿಡ್ತಾ ಅದು… ಅಲ್ಲಾ ಮತ್ತೆ… ಎಂದು ಸಿಡುಕಿ ಮರೆಯಾದಳು.

ನಾವೀಗಲೂ ವಿಶ್ವ ವಿಜಯೀ

we are still world champs. ಭಾರತ ತಂಡದ ನಾಯಕ ಆಸ್ಟ್ರೇಲಿಯಾದವರಿಂದ ಮತ್ತೊಮ್ಮೆ ಇಕ್ಕಿಸಿಕೊಂಡ ನಂತರ ಹೇಳಿದ ಮಾತು. ಅದರ ಅರ್ಥ ಇನ್ನೂ ಮೂರು ನಾಲ್ಕು ವರ್ಷಗಳ ಕಾಲ ಸೋಲಿನ ಮೇಲೆ ಸೋಲನ್ನು ನಾವು ಅನುಭವಿಸಿದರೂ ಪರವಾಗಿಲ್ಲ, ಈಗಲೂ ನಾವು ವಿಶ್ವ ಚಾಂಪಿಯನ್ನರು.

ಗತ ಕಾಲದ ವೈಭವವನ್ನು ಮೆಲುಕು ಹಾಕುತ್ತಾ ವಾಸ್ತವದ ಬಗ್ಗೆ ಅಸಡ್ಡೆ ತೋರಿಸುತ್ತಾ ಸಾಗುವ ಸಮಾಜ ನಮ್ಮನ್ನು ಬಿಟ್ಟರೆ ಬೇರೆಯೂ ಇರಬಹುದೇ, ಅಥವಾ are we unique in this?

ಈಗ ತಾನೇ ಮುಕ್ತಾಯ ಗೊಂಡ ಆಸೀ-ಭಾರತ ನಾಲ್ಕು ಟೆಸ್ಟ್ ಗಳ ಟೆಸ್ಟ್ ಪಂದ್ಯಾವಳಿ ಕ್ರಿಕೆಟ್ ಇತಿಹಾಸದ ಕಡಿಮೆ ಸಮಯದಲ್ಲಿ ಮುಕ್ತಾಯವಾದ ಸರಣಿ ಆಗಿರಬಹುದೇ? ಏಕೆಂದರೆ ಎರಡು ಟೆಸ್ಟ್ ಗಳು ಮೂರೇ ಮೂರು ದಿನಗಳಲ್ಲಿ ಮುಕ್ತಾಯವಾದವು. ಮತ್ತೆರಡು ಟೆಸ್ಟ್ ಗಳು ನಿಗದಿತ ಸಮಯಕ್ಕಿಂತ ಬೇಗ ಮುಕ್ತಾಯವಾಯಿತು.

ಆಘಾತಕಾರೀ ಸುದ್ದಿ: ಪಾಕಿಸ್ತಾನಕ್ಕೆ ಆಘಾತಕಾರೀ ಗೆಲುವು. ಎರಡನೇ ಟೆಸ್ಟ್ ನಲ್ಲಿ ಗೆಲ್ಲಲು ಕೇವಲ ೧೪೫ ರನ್ನುಗಳ ಗುರಿ ಇಟ್ಟುಕೊಂಡಿದ್ದ ಬಲಿಷ್ಠ ಇಂಗ್ಲೆಂಡ್ ತಂಡ ಕೇವಲ ೭೨ ರನ್ನುಗಳನ್ನು ಮಾಡಿ ತನ್ನೆಲ್ಲಾ ವಿಕೆಟು ಗಳನ್ನು ತರಗೆಲೆ ಗಳಂತೆ ಉದುರಿಸಿ ಕೊಂಡಿತು. ಪಾಕಿಸ್ತಾನದ ಹಲವು ಆಟಗಾರರು ಜೈಲಿನಲ್ಲಿದ್ದರೂ, ತಂಡ ಒಗ್ಗಟ್ಟಿನಿಂದ ಆಡುವ ಅನುಮಾನವಿದ್ದರೂ, ಪಾಕ್ ಅಮೋಘ ಯಶಸ್ಸನ್ನು ಸಾಧಿಸಿತು ತನ್ನ ಮಾಜಿ ಒಡೆಯನ ವಿರುದ್ಧ. ಭಯೋತ್ಪಾದಕರ ಬೆದರಿಕೆಗೆ ತನ್ನ ನೆಲದಲ್ಲೇ ಆಡಲು ಯೋಗ್ಯತೆ ಇಲ್ಲದ ತಂಡ ಮೂರನೇ ದೇಶವೊಂದರಲ್ಲಿ, ( ನ್ಯೂಟ್ರಲ್ ಅವೆನ್ಯೂ ) ಆಡಿ ಸಾಧಿಸಿದ್ದನ್ನು ನೋಡಿದರೆ ನಾವೂ ಸಹ ಅದೇ ದಾರಿ ಏಕೆ ತುಳಿಯಬಾರದು. ನಮ್ಮ ನೆಲದಲ್ಲಿ ಆಡಿದರೂ ನಮಗೆ ಸೋಲು, ಅತಿಥೇಯ ದೇಶದಲ್ಲಿ ಆಡಿದರೂ ಸೋಲು. ನಾವೂ ಹುಡುಕೋಣ ನ್ಯೂಟ್ರಲ್ ಅವೆನ್ಯೂ ಒಂದನ್ನು, ಬಾರಿಸೋಣ ಜಯಭೇರಿಯನ್ನು.

ಒಂದು ಎಸ್ಸೆಮ್ಮೆಸ್ ಜೋಕು…

ಪತಿ ಪತ್ನಿಯರು ಕಿಡ್ನಿ ಮತ್ತು ಲಿವರ್ ಇದ್ದ ಹಾಗೆ

ಪತಿ ಲಿವರ್ ಆದರೆ, ಹೆಂಡತಿ ಕಿಡ್ನಿ

ಲಿವರ್ ಫೇಲ್ ಆದರೆ ಕಿಡ್ನಿಯೂ ಫೇಲ್, 

ಕಿಡ್ನಿ ಫೇಲ್ ಆದರೆ,

ಲಿವರ್ ಬೇರೊಂದು ಕಿಡ್ನಿಯೊಂದಿಗೆ ಹೊಂದಿಕೊಳ್ಳುತ್ತದೆ.  

 

ಮತ್ತೊಂದು:

ಮಡದಿ ವಯ್ಯಾರದಿಂದ ಗಂಡನ ಕೊರಳ ಸುತ್ತ ಬಾಹುಗಳನ್ನು ಹೆಣೆದು, ಏನೂಂದ್ರೆ, ನಾನ್ಹೇಗ್ ಕಾಣ್ತಿದ್ದೀನಿ ಎಂದು ಮತ್ತಷ್ಟು ವಯ್ಯಾರದಿಂದ ಕೇಳಿದಾಗ, ಗಂಡ ಹೇಳಿದ…

ಶಿವನ ಕೊರಳಿನ ಸುತ್ತ ಸುತ್ತಿ ಕೊಂಡ ನಾಗರದ ಥರ”

 

ನೀವು ಯಾರ ಪರ?

Bridgestone ಟೈರ್ ನವರ ಜಾಹೀರಾತು. we are by your side. ಮತ್ತೊಂದು ಕಂಪೆನಿಯೂ ಇದೇ ರೀತಿಯ ಅರ್ಥ ಬರುವ ಜಾಹೀರಾತನ್ನು ಮಾಡಿತ್ತು. ಅಮೆರಿಕೆಯ ವಿರುದ್ಧದ ೯/೧೧ ಧಾಳಿಯ ನಂತರ ಕಂಗೆಟ್ಟ ಅಮೆರಿಕೆಯ ಅಧ್ಯಕ್ಷ ಜಾರ್ಜ್ ಬುಶ್ ಕ್ರುದ್ಧರಾಗಿ ವಿಶ್ವವನ್ನು ಕೇಳಿದ್ದು ನೀವು ನಮ್ಮ ಪರವೋ, ಅಲ್ಲವೋ? ಈ ಮಾತುಗಳಿರಬೇಕು ಜಾಹೀರಾತಿಗೆ ಸ್ಫೂರ್ತಿ.

ಒಂದು ರೀತಿಯ ಬೀದಿ ಜಗಳಗಂಟರ ಟೋನ್ ಎನ್ನಬಹುದು ಜಾರ್ಜ್ ಬುಶ್ ರದು. ಆದರೆ ಅಮೆರಿಕೆಯ ಅಧ್ಯಕ್ಷ ಎಂದ ಮೇಲೆ ‘ಸಬ್ ಕುಚ್ ಚಲ್ತಾ ಹೈ’. ಅಮೆರಿಕೆಯನು ಸಾಂತ್ವನ ಗೊಳಿಸಲು ವಿಶ್ವದ ನಾಯಕರಿಗಳ ದಂಡು ಅಮೆರಿಕೆಯ ರಾಜಧಾನಿಗೆ ಬಂದಿತು. ಬಂದವರು ಶ್ವೇತಭವನದಲ್ಲಿ ಅಧ್ಯಕ್ಷರನ್ನು ಭೆಟ್ಟಿ ಮಾಡಿದ ನಂತರ ಅಲ್ಲಿ ಇರಿಸಲಾಗಿದ್ದ ದಾಖಲೆ ಪುಸ್ತಕದಲ್ಲಿ ತಮ್ಮ ಬೆಂಬಲ ಅಮೆರಿಕೆಗೆ ಸಾರಿದರು. ಈ ಘಟನೆಯ ನಂತರ, ಮತ್ತು ತನ್ನ ಅಧಿಕಾರಾವಧಿ ಉದ್ದಕೂ ಜಾರ್ಜ್ ಬುಶ್ ವಿಶ್ವಕ್ಕೆ gaffe ಗಳನ್ನು ಉಣಬಡಿಸುತ್ತಾ ಹೋದರು. ಅಂಥ gaffe ಗಳ ಬಗ್ಗೆ  ನೆನಪಾದಾಗಲೆಲ್ಲಾ ನಿಮ್ಮೊಂದಿಗೆ ಮೆಲುಕು ಹಾಕುತ್ತೇನೆ.

ಪಾಕಿಸ್ತಾನದಲ್ಲಿ ಆಂಜನೇಯ

ರಾಮಾಯಣದಲ್ಲಿ ನಮ್ಮೆಲ್ಲರ ಕಲ್ಪನೆಯನ್ನು ಹಿಡಿದಿಡುವ ಮಹತ್ತರ ಪಾತ್ರ ಎಂದರೆ ಹನುಮಂತನದು. ಸ್ವಾಮಿ ನಿಷ್ಠೆ ಮತ್ತು ಶೌರ್ಯಗಳ ಸಂಕೇತವಾದ ಹನುಮಾನ್ ಹಲವು ಹೆಸರುಗಳಿಂದ ನಮಗೆ ಪರಿಚಿತ. ಚಿಕ್ಕವನಿದ್ದಾಗ ನಮ್ಮ ನೆರೆಯವರೊಂದಿಗೆ ಭದ್ರಾವತಿ ಸಮೀಪದ ಸುಣ್ಣದ ಹಳ್ಳಿಯ ಆಂಜನೇಯನ ದೇವಸ್ಥಾನಕ್ಕೆ ಒಂದೆರಡು ಬಾರಿ ಭೇಟಿ ಕೊಟ್ಟು ದೇವಸ್ಥಾನದಲ್ಲಿ ನೇತು  ಹಾಕಿದ್ದ ಘಂಟೆ ಬಾರಿಸಿ ಪ್ರಸಾದ ಸವಿದಿದ್ದೆ. ಭಾರತದಲ್ಲಿ ಆಂಜನೇಯನ ದೇವಸ್ಥಾನಗಳಿಗೆ ಬರವಿಲ್ಲ. ಆದರೆ ಪಾಕಿಸ್ತಾನದಲ್ಲೂ ಆಂಜನೇಯನ ಇರುವಿಕೆ ಇಂದು ನನ್ನ ಕಣ್ಣಿಗೆ ಬಿತ್ತು. ಲಾಹೋರ್ ನಗರದ ಸಂಗ್ರಹಾಲಯದಲ್ಲಿ ವಿರಾಜಮಾನ ಹನುಮಂತನ ಚಿತ್ರ ಮೇಲಿನದು. 

ಚಿತ್ರ ಕೃಪೆ: ಪಾಕಿಸ್ತಾನಿ ವನಿತೆ ಮಾಹಮ್ ತಾರಿಕ್ ರವರ flikr ಖಾತೆಯಿಂದ