ಬೆಟ್ಟಿಂಗ್ ಭಯ

ಭಾರತ ಪಾಕ್ ನಡುವೆ ೨೦೧೧ ರ ವಿಶ್ವ ಕ್ರಿಕೆಟ್ ಕಪ್ ಸೆಮಿಫೈನಲ್ ಮೊಹಾಲಿಯಲ್ಲಿ. ಎಲ್ಲರ ದೃಷ್ಟಿಗಳೂ ಮೊಹಾಲಿ ಕಡೆಗೂ ಮತ್ತು ಕ್ರಿಕೆಟಿಗರ ಕಡೆಗೂ ನೆಟ್ಟಿರುವುದರಲ್ಲಿ ಸಂಶಯವಿಲ್ಲ. ವಿಶ್ವದ ಅತಿ ಸ್ಪರ್ದಾತ್ಮಕ ಕ್ರೀಡೆ ಎಂದರೆ ಭಾರತ ಪಾಕ್ ನಡುವಿನ ಜಿದ್ದಾ ಜಿದ್ದಿನ ಕ್ರಿಕೆಟ್. ಸಹಜವಾಗಿಯೇ ಭಾರತೀಯರಿಗೂ ಪಾಕಿಗಳಿಗೂ ತಮ್ಮ ತಂಡವೇ ಗೆಲ್ಲಬೇಕು ಎನ್ನುವ ಅದಮ್ಯ ಆಸೆ ಮನದಲ್ಲಿದ್ದರೂ ಕ್ರಿಕೆಟ್ ಮೋಹಕವಾಗಿ ರಂಜಿಸಬಲ್ಲುದೆ ಎನ್ನುವುದನ್ನು ಕಾದು ನೋಡಬೇಕು. ಬ್ಯಾಟಿಂಗ್ ನಲ್ಲಿ ಈಗಿನ ಭಾರತವನ್ನ ಮೀರಿಸುವ ತಂಡ ಮತ್ತೊಂದಿಲ್ಲ, ಆದರೆ ಬೌಲಿಂಗ್ ನಲ್ಲಿ ನಮ್ಮ ಸಾಧನೆ ಎಂದಿಗೂ ಉತ್ಕೃಷ್ಟ ಮಟ್ಟದ್ದಾಗಿರಲಿಲ್ಲ. ಆದರೂ ವೇಗದ ಬೌಲಿಂಗ್ ನಲ್ಲಿ ಜಹೀರ್ ಖಾನ್ ಪ್ರದರ್ಶಿಸುತ್ತಿರುವ ಸಾಹಸ ಪ್ರಶಂಸಾರ್ಹವೆ. ಜಹೀರ್ ರನ್ನು ನಾಯಕ ಯಾವ ರೀತಿಯಲ್ಲಿ ಬಳಸಿಕೊಳ್ಳುವರು ಎನ್ನುವುದರ ಮೇಲೆ ಅವಲಂಬಿತ ಈ ಪಂದ್ಯದ ಫಲಿತಾಂಶ. ಯಾರು ಯಾರನ್ನು ಹೇಗೆ ಬೇಕಾದರೂ ಬಳಸಿಕೊಳ್ಳಲಿ, ಕೋಟ್ಯಂತರ ಭಾರತೀಯರ ಆಸೆ ಮಾತ್ರ ಈಡೇರಲಿ.

ಈ ನಡುವೆ ಪಾಕ್ ದೇಶದ ಆಂತರಿಕ ವ್ಯವಹಾರಗಳ ಸಚಿವ ಪಾಕ್ ಕ್ರೀಡಾಗಾರರಿಗೆ ಬೆಟ್ಟಿಂಗ್ ಬಲೆಗೆ ಬೀಳದಂತೆ ಕಟು ಎಚ್ಚರಿಕೆ ನೀಡಿದ್ದಾರೆ. ಪಾಕಿಗಳ ಹಿಂದಿನ ಪುರಾಣ ಓದಿದವರಿಗೆ ಈ ಎಚ್ಚರಿಕೆ ಸಮಂಜಸವಾಗಿ ಕಂಡರೂ ತಾನು ಈ ಪಂದ್ಯದಲ್ಲಿ ಸೋತರೆ ಮಗುಮ್ಮಾಗಿ ಬೆಟ್ಟಿಂಗ್ ಗುಮ್ಮವನ್ನು ತನ್ನ ತಂಡದ ಮೇಲೆ ಹೊರೆಸಿ ಮಾನ ಕಾಯ್ದು ಕೊಳ್ಳುವ ಹುನ್ನಾರವೇನಾದರೂ ಇರಬಹುದೇ ಈ ಎಚ್ಚರಿಕೆ ಘಂಟೆಯ ಹಿಂದೆ? ಒಂದು ರೀತಿಯ pre-emptive ತಂತ್ರ. ಎಷ್ಟಿದ್ದರೂ ರೆಹಮಾನ್ ಮಲಿಕ್ ರಾಜಕಾರಣಿ, ತನ್ನ ಕುಬುದ್ಧಿಯನ್ನು ಎಂದಿಗಾದರೂ ಬಿಟ್ಟಾನೆಯೇ? ಮಂತ್ರಿಯ ಎಚ್ಚರಿಕೆಯ ಬಗ್ಗೆ ಒಬ್ಬ ಓದುಗ ಪ್ರತಿಕ್ರಯಿಸಿದ್ದು ಹೀಗೆ: 

ಮಂತ್ರಿಯ ಎಚ್ಚರಿಕೆಯು ತನ್ನದೇ ಮನೆಯ ಮುಂದೆ “ವೇಶ್ಯಾವಾಟಿಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ” ಎನ್ನುವ ಸೂಚನಾ ಫಲಕ ನೇತು ಹಾಕಿದಂತೆ. ಹೇಗಿದೆ ಡೈಲಾಗು?

ಚಂದ್ರ ಮತ್ತಷ್ಟು ಹತ್ತಿರ, ಆಪ್ತ

ಚಂದ್ರ ಮತ್ತಷ್ಟು ಹತ್ತಿರ, ಆಪ್ತ. ೧೯ ವರ್ಷಗಳ ನಂತರ ಇಂದು ಚಂದ್ರ ನಮಗೆ ಹತ್ತಿರ ಬಂದಿದ್ದಾನಂತೆ. ಭೂವಾಸಿಗಳಲ್ಲಿ ಅದ್ಯಾವ ಹೆಗ್ಗಳಿಕೆ ನೋಡಿ ಬಂದನೋ ಇನ್ನಷ್ಟು ಸಮೀಪ ನನಗೆ ತಿಳೀದು, ಆದರೆ ಸೂಪರ್ ಮೂನ್, ಮೆಗಾ ಮೂನ್, ಡಬ್ಬಲ್ ಮೂನ್ ಹಾಗೆ ಹೀಗೆ ಎಂದು ಕೆಲದಿನಗಳಿಂದ ಕೇಳುತ್ತಾ ಇದ್ದುದರಿಂದ ಸಂಜೆಯ ದೂರದ ನೆಂಟನಿಗಾಗಿ ಕಾದು ಕೂತೆ. ಮಧ್ಯಾಹ್ನದ ಉರಿ ಸೂರ್ಯ, ಸಂಜೆಯಾಗುತ್ತಾ ಬೆಳ್ಳಿ ಬಣ್ಣ ಪಡೆದುಕೊಂಡು, ಸ್ವಲ್ಪ ನಂತರ ತನ್ನ ಮೈಯ್ಯನ್ನು ಕಿತ್ತಳೆ ಬಣ್ಣಕ್ಕೆ ಬದಲಿಸಿಕೊಂಡು ತನ್ನ ವಧು ಕೆಂಪು ಸಮುದ್ರದ ತೆಕ್ಕೆಗೆ ಜಾರಿದ ಕೆಲ ಹೊತ್ತಿನಲ್ಲೇ ಕಳ್ಳ ನಗೆ ಬೀರುತ್ತಾ ಬಂದ ನಮ್ಮ ಮಾಮ. ಚಂದಾಮಾಮ. ಅರೆ, ಇದೇನಿದು,  ೧೯ ವರ್ಷಗಳ ನಂತರ ಹತ್ತಿರ ಬಂದ ಈ ಮಾಮ ಥೇಟ್ ಹಿಂದಿನ ಮಾಮನ ಥರವೇ ಇದ್ದ. ಮುಖದಲ್ಲಿ ಸ್ವಲ್ಪ ಹೆಚ್ಚು ಮಾಂಸ ತುಂಬಿಕೊಂಡು ನಳನಳಿಸುತ್ತಾ ಬರಬಹುದು ಎಂದೆಣಿಸಿದ್ದ ನನಗೆ ಕಾಣಲು ಸಿಕ್ಕಿದ್ದು ಅದೇ age old ಮಾಮ. (ಅಂಕಲ್ ಅಂತ ಅವನನ್ನು ಕರೆಯಲು ನನಗೆ ಇಷ್ಟವಿಲ್ಲ. ಬಸ್ ಸ್ಟಾಂಡ್ ನಲ್ಲಿ ಕೈ ಚಾಚಿ ಬೇಡುವವನೂ, ಬಸ್ಸಿನ ಸೀಟಿಗಾಗಿ ಜಗಳ ಕಾಯುವವರೆಲ್ಲಾ ಅಂಕಲ್ ಗಳೇ ಆದ್ದರಿಂದ ನಮ್ಮ ಚಂದಾ ಮಾಮನಿಗೆ ಆಂಗ್ಲ ಪ್ರಯೋಗ ಬೇಡ.). ನನ್ನ ಬರಿಗಣ್ಣಿಗೆ ಇವನು ಅದೇ ಗಾತ್ರದ ಮಾಮ. ಮುಖದ ತುಂಬಾ freckles ಇದ್ದರೂ ತನ್ನ ಕಾಂತಿಯನ್ನು ತನ್ನನ್ನು ಸುತ್ತುವರೆದ ಮೋಡಗಳಿಗೂ ನೀಡುತ್ತಾ aloof ಆಗಿ ಆಗಸಕ್ಕೆ ಅಂಟಿ ಕೊಂಡ ಮಾಮ. ಬಹುಶಃ ಇವನ ನಿಖರವಾದ ಅಳತೆಗೆ ಸ್ಟೆತಾಸ್ಕೋಪು, ಪೆರಿಸ್ಕೋಪು, ಟೆಲಿಸ್ಕೋಪು ಇವ್ಯಾವುದೂ ನನ್ನಲ್ಲಿಲ್ಲದೆ ಇರೋದ್ರಿಂದ ನನಗೆ ಹಳೇ ಮಾಮನ ದರ್ಶನದ ಭಾಗ್ಯ ಮಾತ್ರಾ.  ಸೂಪರ್ ಮೂನ್ ವಿದ್ಯಮಾನದಲ್ಲಿ ಸೂರ್ಯ , ಭೂಮಿ ಮತ್ತು ಚಂದಿರರು ಒಂದೇ ರೇಖೆಯಲ್ಲಿ ಇದ್ದು ಚಂದ್ರ ಮತ್ತು ಭೂಮಿಗಳು ಸ್ವಲ್ಪ ಸಮೀಪಕ್ಕೆ ಬರುತ್ತವಂತೆ. ಸೂಪರ್ ಮೂನ್ ಕಾರಣ, ಪ್ರವಾಹ, ಭೂಕಂಪ, ಜ್ವಾಲಾ ಮುಖಿ, ಬಿರುಗಾಳಿಗಳೂ ಸಂಭವಿಸಬಹುದಂತೆ. ಬ್ರೇಕಿಂಗ್ ನ್ಯೂಸ್ ನಲ್ಲಿ ಇದುವರೆಗೂ ಯಾವುದೇ ಅಹಿತಕರ ನೈಸರ್ಗಿಕ ಅವಘಡ ಸಂಭವಿಸಿಲ್ಲ.

ಒಂದೇ ಒಂದು ಅವಘಡ ಏನೆಂದರೆ ಕಳೆದ ಹಲವು “ವಿಶ್ವಕಪ್ ಪಂದ್ಯಾವಳಿ” ಯ ೩೫ ಪಂದ್ಯಗಳಲ್ಲಿ ಮೊಟ್ಟ ಮೊದಲ ಬಾರಿಗೆ ಆಸ್ಟ್ರೇಲಿಯಾ ಸೋಲನ್ನು ಕಂಡಿದ್ದು ಅದೂ ದುರ್ಬಲ, ಪಾಕ್ ತಂಡದ ಕೈಯ್ಯಲ್ಲಿ.     

ಹೀಗೇ ಸುಮ್ಮನೆ: ಸೂಪರ್ ಮೂನ್ ಎನ್ನುವ ಪದವನ್ನು ಶುರು ಮಾಡಿದ್ದು HOROSCOPE ಪತ್ರಿಕೆಯ ಜ್ಯೋತಿಷ್ಯಕಾರ Richard Nolle.

೯೯೯೯

ಒಂಭತ್ತು ಸಾವಿರದ ಒಂಭೈನೂರ ತೊಂಭತ್ತೊಂಭತ್ತು, (೯೯೯ ); ಈ ಫಿಗರ್ ನೋಡಿ “ಬಾಟಾ” ದವರ ಎಕ್ಕಡ ಅಥವಾ ಬೂಟ್ ಗಳು ನೆನಪಿಗೆ ಬಂತೇ? ಹೌದು ಅವರೇ ತಾನೇ ಈ ರೀತಿಯ ಫುಲ್ ನಂಬರ್ ಗಳ ದಡದ ತುದಿಗೆ ಬಂದು ನಿಲ್ಲೋದು? ಸಾವಿರ ಎಂದು ಬಿಟ್ಟರೆ ಜನ ಹೌಹಾರುವರು ಎಂದು ೯೯.೯೯ ಅಂತ ಬೆಲೆ ಇಟ್ಟು ನೂರು ರೂಪಾಯಿ ಪೂರ್ತಿಯಾಗಿ ಪೀಕಿಸಿ ಕೊಂಡು ಒಂದು ಪೈಸೆಯ ಚೇಂಜ್ ಸಹ ಕೊಡದೆ ನೂರು ರೂಪಾಯಿ ಕೊಟ್ಟೆ ಈ ಚಪ್ಪಲಿಗೆ ಎಂದು ಹೇಳಲೂ ಭಯ ಆಗುವಂತೆ ಮಾಡಿದ್ದು ? ನೂರು ರೂಪಾಯಿಗೆ ಒಂದು ಪೈಸೆ ಕಡಿಮೆ ಕೊಟ್ಟು ನೂರು ಕೊಟ್ಟೆ ಎಂದು ಹೇಳೋದು ನಾಗರೀಕರ ಲಕ್ಷಣ ಅಲ್ಲ, ಅಲ್ಲವೇ? ಹಾಳು ಪುರಾಣ ಬಿಡಿ, ಈ ೯೯೯೯ ಬಾಟಾ ದ ಎಕ್ಕಡ ಬೆಲೆಯೂ ಅಲ್ಲ, ಯಾವುದೋ ಎಮೆರ್ಜೆನ್ಸಿ ನಂಬರ್ ಸಹ ಅಲ್ಲ. ಇದು ನನ್ನ ಪ್ರೀತಿಯ ಊರಿನ, ಪ್ರೀತಿಯ ಹಳೇ ಸೇತುವೆ ಮೇಲೆ ದೌಡಾಯಿಸಿದ ಜನರ ಸಂಖ್ಯೆ. ಅಂದರೆ ಹಳೇ ಸೇತುವೆ ಬ್ಲಾಗ್ ಅನ್ನು ಇದುವರೆಗೆ ೯೯೯೯ ಜನ ನೋಡಿದ್ದಾರೆ. ಒಂದು ರೀತಿಯ ಶುಭ ಸಂಖ್ಯೆ, ಈ ಶುಭ ಕಾಮನ ಹುಣ್ಣಿಮೆಯಂದು. ಸೂಪರ್ ಮೂನ್ ಹೇಳಿ ಕೊಳ್ಳುವಂಥ ಸೂಪರ್ ಆಗಿ ಕಂಗೊಳಿಸದಿದ್ದರೂ ಈ ಸಂಖ್ಯೆ ಮಾತ್ರ ನನ್ನಲ್ಲಿ ಒಂದು ತೆರನಾದ ಸಂಚಲನ ತಂದಿದ್ದಂತೂ ನಿಜವೇ.  

ನನ್ನ ಬರಹ ನೋಡಿದ ಜನರಿಗೆ ನಾನು ಬರಹಗಾರ ಅಲ್ಲ ಎಂದು ಅನ್ನಿಸಿದರೆ ನನ್ನ ಮೇಲೆ ಸೂಪರ್ ಮೂನ್ ಆಗಲಿ, ವಿಶಾಲವಾದ ಆಗಸವಾಗಲಿ ಕಳಚಿ ಬೀಳೋಲ್ಲ. ನನ್ನಲ್ಲಿ ಕೀಳರಿಮೆ ಸಹ ಮನೆ ಮಾಡೋಲ್ಲ. ಯಾರೋ ಒಬ್ಬರು ಹೇಳಿದಂತೆ ನಾನು ಗಟ್ಟಿ ಮನುಷ್ಯ. ಎಷ್ಟಿದ್ದರೂ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇರುವ ನಗರಿಯವನಲ್ಲವೇ ನಾನು? 

ಪುಕ್ಕಟೆ ಸಿಗುವ ಆಸೆಗೆ ಬಲಿ ಬಿದ್ದು ಶುರು ಮಾಡಿದ್ದು ಈ ಧಂಧೆ. ಬರೆಯುವ ಧಂಧೆ.  ಅದೇನು ಪುಕ್ಕಟೆ ಅಂತ ಜೊಳ್ಳು ಸುರಿಸಿದಿರಾ? ನಾಚಿ ಕೊಳ್ಳಬೇಡಿ, ಮನುಷ್ಯನ ಜಾಯಮಾನವೇ ಅದು. ಪುಕ್ಕಟೆ ಸಿಕ್ಕಿದ್ದು ಬ್ಲಾಗ್ ಆರಂಭಿಸುವ ಸೌಲಭ್ಯ.  ಕರ್ನಾಟಕ ರಾಜ್ಯದ ೧೦ ಲಕ್ಷದ, ೧೦ ಲಕ್ಷ ಪೂರ್ತಿ ಕೈಗೆ ಬರದ  ಲಾಟರಿಯಂತೂ ಅಲ್ಲ. ವರ್ಡ್ಪ್ರೆಸ್, ಬ್ಲಾಗ್ಸ್ಪಾಟ್, “tumblr” ಮುಂತಾದವರು ಜನರಿಗೆ ತಮ್ಮ ಬರವಣಿಗೆಯ ತೀಟೆ ತೀರಿಸಿಕೊಳ್ಳುವುದಕ್ಕಾಗಿ ಬ್ಲಾಗ್ ಸೈಟ್ ಆರಂಭಿಸಿಕೊಳ್ಳುವ ಸವಲತ್ತು ನೀಡಿದಾಗ ಮುಗಿಬಿದ್ದು ಕೈ ಚಾಚಿದವರಲ್ಲಿ ನಾನೂ ಒಬ್ಬ.  ಬ್ಲಾಗಿಗೊಂದು ಹೆಸರು ಕೊಡಬೇಕು. ಚಿತ್ರ ವಿಚಿತ್ರ ಹೆಸರುಗಳು ಮನಃ ಪಟಲದ ಮೇಲೆ ಹಾದು ಹೋದರೂ ಸೊರಗಿದ ಭದ್ರಾ ನದಿಯ ಸಂಗಾತಿ ಹಳೇ ಸೇತುವೆ ಹೆಸರನ್ನು ಇಟ್ಟೆ. ಶಾಲೆಗೆ ಚಕ್ಕರ್ ಹೊಡೆದು ಇದೇ ಹಳೇ ಸೇತುವೆ ದಾಟಿ ಕನಕ ಮಂಟಪಕ್ಕೆ ಬಂದು ಪುಢಾರಿಗಳ ಭಾಷಣ ಕೇಳುತ್ತಿದ್ದೆ. ಎಲ್ರೂ ಚಕ್ಕರ್ ಹೊಡೆದು ಸಿನೆಮಾಕ್ಕೂ, ಕ್ರಿಕೆಟ್ ಆಡೋಕ್ಕೂ ಹೋದ್ರೆ ಈ ಅಬ್ಬೇಪಾರಿ ಏನು ಪುಡ್ಹಾರಿ, ಗಿಡ್ಹಾರಿ ಅಂತಿದ್ದಾನೆ ಎಂದು ಮೂಗಿನ ಮೇಲೆ ಬೆರಳಿಡ ಬೇಡಿ. ರಾಜಕಾರಣ ಎಂದರೆ ೧೯೭೭ ರಿಂದ ನನಗೆ ತುಂಬಾ ಇಷ್ಟ. ನನ್ನ ಪಕ್ಷ ಜನತಾ ಪಕ್ಷ. ಮೊರಾರ್ಜಿ ಭಕ್ತ. ಚರಣ್ ಸಿಂಗ್ ಮೊರಾರ್ಜಿಗೆ ಕೈ ಕೊಟ್ಟಾಗ ತಲೆ ಮೇಲೆ ಕೈಹೊತ್ತು ಕೂತ ಮಿಡ್ಲ್ ಸ್ಕೂಲ್ ಬಾಲಕ ನಾನು. ಮಾರ್ವಾಡಿ ಸ್ನೇಹಿತನೊಬ್ಬ ಇಂದಿರಾ ನಮ್ ತಾಯಿ ಎಂದಾಗ, ನಾನೇಕೆ ಇವನನ್ನು ಮೀರಿಸಬಾರದು ಎಂದು ಮೊರಾರ್ಜಿ ನಮ್ಮಪ್ಪ ಎಂದು ಹೇಳಿ embarrass ಆದವನು.  ನನ್ನ ಬ್ಲಾಗ್ ನ “ಹಳೇ ಸೇತುವೆ” ಹೆಸರು ಕೆಲವರಿಗೆ ಹಿಡಿಸಿತೂ ಕೂಡಾ, ಅದರೊಂದಿಗೆ ಸವಾರಿಯಾಗಿ ಬಂದ ಬ್ಲಾಗ್ ಪೋಸ್ಟ್ ಗಳೂ ಕೆಲವರಿಗೆ ಇಷ್ಟವಾದವು. ಇನ್ನೂ ಕೆಲವರಿಗೆ “ತುಂಬಾ” ಇಷ್ಟವಾಗಿ ಅಜೀರ್ಣಕ್ಕೂ ದಾರಿ ಮಾಡಿ ಕೊಟ್ಟಿತು. ಒಂದಂತೂ ಸತ್ಯ, ಮೆಚ್ಚಿದವರು, ಮೆಚ್ಚದವರು ನನ್ನಲ್ಲಿ ಹುರುಪನ್ನಂತೂ ತುಂಬಿದರು ನನ್ನ ಬರಹ ಮುಂದುವರೆಯಲಿ ಎಂದು. ಕನ್ನಡಿಗ ಉದಾರಿ, ಸಹೃದಯಿ ಎನ್ನುವ ಮಾತಿಗೆ ನನ್ನ ಬಡ, ಸುಣ್ಣದ ಕಲ್ಲಿನ ಸೇತುವೆಗೆ ಬಂದ ಪ್ರತಿಕ್ರಿಯೆಗಳೇ ಸಾಕ್ಷಿ.   

ಮೆಚ್ಚಿದವರಿಗೂ, ಮೆಚ್ಚದವರಿಗೂ ನನ್ನ ಸವಿನಯ, ಗೌರವಪೂರ್ವಕ  ಪ್ರಣಾಮಗಳು.

ನೀವು ಪುಸ್ತಕದ ನರಿಗಳೋ?

ಪುಸ್ತಕದ ಹುಳುವಿನ ಬಗ್ಗೆ ಕೇಳಿರಲೇಬೇಕಲ್ಲವೇ ನೀವು? ಏನೇ ಅನ್ನಿ ಅತಿಯಾಗಿ ಓದುವವರನ್ನು, ಪುಸ್ತಕಗಳನ್ನು ಪ್ರೀತಿಸುವವರನ್ನು ಹುಳು ಎಂದು ಮಾತ್ರ ಜರೆಯಬಾರದಿತ್ತು ನಮ್ಮ ಹಿರಿಯರು. ‘ದೇಶ ಸುತ್ತು ಇಲ್ಲಾ ಕೋಶ ಓದು’ ಎಂದ ಸಮಾಜವೇ ಈ ಹುಳು ಎನ್ನುವ ಪದವನ್ನು ಓದುಗನಿಗೆ ದಯಪಾಲಿಸಿದ್ದು ಅಚ್ಚರಿಯೇ ಸರಿ. ಜ್ಞಾನಾರ್ಜನೆಯ ಮೊದಲ ಮೆಟ್ಟಿಲೇ ಓದು. ಪವಿತ್ರ ಕುರಾನ್ ಅವತೀರ್ಣವಾಗಿದ್ದು ಈ ಆರಂಭದ ಸಾಲಿನಿಂದ. “ಓದು, ನಿನ್ನನ್ನು ಸೃಷ್ಟಿಸಿದ ಭಗವಂತನ ನಾಮದಿಂದ”. ಓದಿನ ಬಗೆಗಿನ ವರ್ಣನೆ, ಕಲ್ಪನೆಗಳು ಹೀಗಿರುವಾಗ ಹುಳು ನುಸುಳಿದ್ದಾದರೂ ಎಲ್ಲಿಂದ? ಅಥವಾ ಪುಸ್ತಕದ ಹುಳು ಎಂದು ಕರೆಯುವಾಗ ಅದರಲ್ಲಿ ಗೂಢಾರ್ಥವೇನಾದರೂ ಅವಿತಿರಬಹುದೇ? ಏಕೆಂದರೆ ಹಳೇ ತಲೆಮಾರಿನ ತಲೆ ಯೋಚಿಸುವ ರೀತಿಯೇ ಬೇರೆ ನೋಡಿ.

ಎಲ್ಲರಿಗೂ ತಿಳಿದಂತೆ ಕಾಗದದ ಉತ್ಪಾದನೆ ಮರಗಳಿಂದ ತಾನೇ ? ಗೆದ್ದಲಿನಂಥ ಹುಳುವಿನ ಕೆಲಸವೂ ಅದೇ ಅಲ್ಲವೇ? ಒಂದು ಆರೋಗ್ಯವಂತ, ದಷ್ಟ ಪುಷ್ಟ ಮರವನ್ನ ನಿಧಾನವಾಗಿ, ಶ್ರದ್ಧೆಯಿಂದ ಕೊರೆಯುತ್ತಾ ದುರ್ಬಲಗೊಳಿಸಿ ಕೊನೆಗೆ ಅದರ ಅವಸಾನಕ್ಕೆ ಕಾರಣವಾಗುವುದು? ಒಂದು ಮರವನ್ನು ಬಲಿ ಹಾಕಿ ತಾನೇ ನಮ್ಮ ಮಹೋನ್ನತ ನಾಯಕರ ಬಲಿದಾನದ ಬಗ್ಗೆ ನಾವು ಓದೋದು? ಈ ಕಾರಣಕ್ಕಾಗಿರಬಹುದೇ ಪುಸ್ತಕ ಪ್ರೇಮಿಗಳನ್ನು ಪುಸ್ತಕದ ಹುಳು ಎಂದು ನಿಕೃಷ್ಟವಾಗಿ ಕರೆಯುವುದು?

ಪುಸ್ತಕದ ನರಿ. ಪುಸ್ತಕಗಳನ್ನು ನುಂಗುವ, ಅತಿಯಾದ ಕಲ್ಪನಾಮಯಿಯಾಗಿದ್ದು ಮತ್ತು ಅತಿ ಹೆಚ್ಚು ಪುಸ್ತಕದಂಗಡಿಯ ಖರ್ಚುಳ್ಳ ಒಂದು ಪುಟ್ಟ ಸಸ್ತನಿ. ಪುಸ್ತಕದ ನರಿಗಳು ನಾನಾ ತೆರನಾದ ವಾಸಸ್ಥಳಗಳಲ್ಲಿ ಬದುಕುತ್ತವೆ ಮತ್ತು ಓದಲೆಂದು ಅಸಹಜವಾದ ಸ್ಥಳವನ್ನ ಆಯ್ಕೆ ಮಾಡಿಕೊಳ್ಳುತ್ತವೆ. ಅವು ಒಂಟಿಯಾಗಿ ಬೇಟೆ ಯಾಡಲು ಇಷ್ಟಪಡುತ್ತವೆ ಮತ್ತು ತಮ್ಮ ಹಿಂಡಿನೊಂದಿಗೆ ತಮ್ಮ ಬೇಟೆಯ ಬಗ್ಗೆ ಚರ್ಚಿಸುತ್ತವೆ.

ಈ ಮೇಲಿನ ಮಾತುಗಳು ಪುಸ್ತಕಗಳನ್ನು ಪ್ರೀತಿಸುವ ವ್ಯಕ್ತಿಯೊಬ್ಬರ ಬ್ಲಾಗ್ನಿಂದ ಸಿಕ್ಕಿದ್ದು. ಓದುಗನನ್ನು ಹುಳು ವಿನೊಂದಿಗೆ ಹೋಲಿಸದೆ ನರಿಯೊಂದಿಗೆ ಹೋಲಿಸಿಕೊಂಡು ಬರೆದ ಸಾಲುಗಳು. ಪುಸ್ತಕದ ನರಿಗೂ, ನರನಿಗೂ ಎಷ್ಟೊಂದು ಸಾಮ್ಯ ನೋಡಿ.

ಈಗ ಹೇಳಿ ನೀವು ಪುಸ್ತಕದ ಹುಳುವೋ ಅಥವಾ ಪುಸ್ತಕದ ಗುಳ್ಳೆ ನರಿಯೋ ಎಂದು.

ನನ್ನ ಬಗ್ಗೆ ಕೇಳಿದಿರಾದರೆ ನನ್ನ ಪುಸ್ತಕ ಪ್ರೀತಿ ಹೀಗೆ. an ardent book enthusiast. ಪುಸ್ತಕದ ಮೇಲ್ಮೆಯನ್ನು ಅಪ್ಯಾಯಮಾನದಿಂದ ಓರ್ವ ಮಮತಾಮಯಿ ತಂದೆ ತನ್ನ ಮಗನ ತಲೆ ಸವರುವಂತೆ ಸವರಿ, ಪುಸ್ತಕದ ಪುಟಗಳನ್ನು ತಿರುವುತ್ತಾ ಅದರೊಳಗಿನಿಂದ ಬರುವ ನತದೃಷ್ಟ ಮರದ ತೊಗಟೆಯ ಘಮ ಘಮ ವಾಸನೆಯನ್ನು ಆಸ್ವಾದಿಸುತ್ತಾ, ಅಕ್ಷರಗಳ ಜೋಡಣೆ, ಅಲಂಕಾರದ ಚೆಂದಕ್ಕೆ ತಲೆದೂಗುತ್ತಾ, ಮುನ್ನುಡಿ, ಹಿನ್ನುಡಿ ಬರೆದವರ ಬಗ್ಗೆ ಕಲ್ಪಿಸಿಕೊಳ್ಳುತ್ತಾ, ಬರೆದವ ಎಷ್ಟು ಸಂಪಾದಿಸಿರಬಹುದೆಂದು ಲೆಕ್ಕ ಹಾಕುತ್ತಾ, ಕೊನೆಗೆ, ಓರೆಗಣ್ಣಿನಿಂದ ಈ ಪುಸ್ತಕಕ್ಕೆ ಎಷ್ಟಿರಬಹುದು ಎಂದು ಭಯ, ಆಸೆ ಮಿಶ್ರಿತ ಭಾವನೆಗಳಿಂದ ನೋಡುವುದೇ ನನ್ನ ಮಟ್ಟಿಗಿನ ಹುಮ್ಮಸ್ಸು, enthusiasm. ಹಾಗಾಗಿ ನಾನು ಅತ್ತ ಯಕಃಶ್ಚಿತ್ ಹುಳುವೂ ಅಲ್ಲ, ಇತ್ತ scheming ಗುಳ್ಳೆ ನರಿಯೂ ಅಲ್ಲ.

ಅತ್ಯಂತ ಸುಂದರ ಸೌದಿಗಳು

ಜೇಡನ ತಾಣವನ್ನು ತಡಕಾಡುತ್ತಿದ್ದಾಗ ಎಡವಿದ ತಾಣ ಸೌದಿ ಮಹಿಳೆಯ ಬ್ಲಾಗ್. ಇಲ್ಲಿ ಹತ್ತು ಅತ್ಯಂತ ಸುಂದರ ಪುರುಷ ಮತ್ತು ಮಹಿಳೆಯರ ಚಿತ್ರಗಳನ್ನೂ ಅವರ ಕಿರು ಪರಿಚಯ ಸಹ ಕೊಡಲಾಗಿದೆ. ಸುಂದರ ಎಂದರೆ earth shattering or heaven cleaving ಎಂದಾಗಿರಬೇಕಿಲ್ಲ. ತಮ್ಮ ಪ್ರತಿಭೆ ಮತ್ತು ಪ್ರಭಾವದಿಂದಲೂ ಜನ ಸುಂದರರಾಗಬಹುದು ಅಲ್ಲವೇ? ಆದರೆ ಇಲ್ಲಿ ಬಹಿರಂಗ ಸೌಡ್ನರ್ಯದ ಕೊರತೆ ಇದೇ ಎಂದಲ್ಲ, ಆದರೆ ಹಾಲಿವುಡ್ ನ ಬ್ರಾಡ್ ಪಿಟ್ ಅಥವಾ ನಮ್ಮ ದೇಸೀ ಸೆಕ್ಸೀ ಕರೀನಾಳಂತೆಯೋ ಅಲ್ಲ ಇಲ್ಲಿರುವವರು. ಸೌದಿ ಒಂದು ನಿಗೂಢ ದೇಶ, ಹಾಗಾಗಿ ತಮಗೂ ಆ ನಿಗೂಢತೆ ಯ ಪರಿಚಯವಾಗಲಿ ಎಂದು ಈ ಬ್ಲಾಗನ್ನು “ಪುನಃ ಬ್ಲಾಗಿ” ಸುತ್ತಿದ್ದೇನೆ. ಎಂಜಾಯ್! 

via Saudiwoman’s Weblog

ತೆರಿಗೆ ವಸೂಲಿ ಮಾಡುವವರು ಮತ್ತು ವೇಶ್ಯೆಯರು

ಪ್ರತೀ ವರ್ಷವೂ ನಡೆಯುವ ಆಸ್ಟ್ರಿಯಾದ ವಾರ್ಷಿಕ ಮೋಜಿನ ಕಾರ್ಯಕ್ರಮದಲ್ಲಿ (annual ball season) ಮೊರಾಕ್ಕೋ ದೇಶದ ಷೋ ಗರ್ಲ್ ಮತ್ತು ಇಟಲಿಯ ಪ್ರಧಾನಿ ಬೆರ್ಲಸ್ಕೊನಿಯವರ ಗರ್ಲ್ ಫ್ರೆಂಡ್ ಹದಿಹರೆಯದ  “ರೂಬಿ” ಯ ಉಪಸ್ಥಿತಿಯನ್ನು ಅಲ್ಲಿಗೆ ಬಂದ ಅತಿಥಿಗಳು ವಿರೋಧಿಸಿದರು. ಇದೊಂದು ಗೌರವಾನ್ವಿತರ ಸಮಾರಂಭ ಮತ್ತು ಮೋಜಿನ ಕಾರ್ಯಕ್ರಮವಾಗಿದ್ದು ಇಲ್ಲಿಗೆ ಕರೆವೆಣ್ಣು ಗಳು ಬಂದು ಘನತೆಯನ್ನು ಕುಗ್ಗಿಸುತ್ತಿದ್ದಾರೆ ಎಂದು ದೂರಿದರು. ಈಕೆಯನ್ನು ಕರೆತಂದಿದ್ದ ಶ್ರೀಮಂತನೊಬ್ಬನಿಗೆ ಮುಂದಿನ ವರ್ಷ ಈ ಸಮಾರಂಭಕ್ಕೆ ಟಿಕೆಟ್ ನೀಡೋದಿಲ್ಲ ಎಂದು ಆಯೋಜಕರು ಹೇಳಿದರು. ಹೀಗೆ, ಪ್ರತಿಷ್ಠಿತ ವ್ಯಕ್ತಿಗಳ, ಶ್ರೀಮಂತರ, ಪ್ರಭಾವೀ  ರಾಜಕಾರಣಿಗಳ ಮತ್ತ ಅವರ ಸಂಸಾರವಂದಿಗರ ಮೋಜಿನ ಮೇಳಕ್ಕೆ ಯಕಃಶ್ಚಿತ್ call girl ಬರುವುದು ಎಂದರೆ ಅಪರಾಧವೇ. ಮೋಜು ಮುಗಿದ ನಂತರ ಅಲ್ಲಿಗೆ ಬಂದ ಕೆಲವರು ಇದೇ call girl ಗಳು ಮಾಡೋ ಕೆಲಸವನ್ನೇ ಮಾಡಿದರೂ ಅದು ಪ್ರತಿಷ್ಠೆ, ಘನತೆ, ಶ್ರೀಮಂತಿಕೆಯ ಕಂಬಳಿಯಡಿ ನುಸುಳಿ ಹೋಗುತ್ತದೆ, we are having ball of a time, you see? ಅದಿರಲಿ, ಈ ಸಮಸ್ಯೆಗೆ ಧಾರ್ಮಿಕ ತಿರುವನ್ನು ನೀಡಿದರು ಕ್ರೈಸ್ತ ಪಾದ್ರಿಯೊಬ್ಬರು. ರೂಬಿಯ ಉಪಸ್ಥಿತಿಯನ್ನು ಸಮರ್ಥಿಸುತ್ತಾ ಪಾದ್ರಿಗಳು ಹೇಳಿದರು,

“ತೆರಿಗೆ ವಸೂಲಿ ಮಾಡುವವರು ಮತ್ತು ವೇಶ್ಯೆಯರು ಎಲ್ಲರಿಗಿಂತ ಮೊದಲು ದೇವನ ಸಾಮ್ರಾಜ್ಯವನ್ನು ಸೇರುವರು”. ಇದಕ್ಕೆ ಉತ್ತರ ಗಡಚ್ಚಿಕ್ಕುವ ಡ್ರಂ ಗಳ ಸದ್ದಿನಲ್ಲಿ, ಕುಣಿತದ ಗದ್ದಲದಲ್ಲಿ, ರೂಬಿಯ ಮೈಮಾಟದ ಪ್ರದರ್ಶನದಲ್ಲಿ ಕೇಳಿಸಲೇ ಇಲ್ಲ.

ಅಜ್ಜಿಯ ನೆನಪು

ಗೋರ್ಬಚೋಫ್ ೮೦ ನೆ ಜನ್ಮದಿನಾಚರಣೆಯ ಹುಮ್ಮಸ್ಸಿನಲ್ಲಿದ್ದಾರೆ. ವಿಶ್ವದ ಅತ್ಯಂತ VISIBLE LEADER ಗಳಲ್ಲಿ ಒಬ್ಬರಾಗಿದ್ದರು ಗೋರ್ಬಚೋಫ್. ೮೦ ರ ದಶಕದಲ್ಲಿ ಅಮೆರಿಕೆಯ ರೊನಾಲ್ಡ್ ರೇಗನ್, ರಷ್ಯದ ಗೋರ್ಬಚೋಫ್ ಸುದ್ದಿ ಮಾಡಿದ್ದೆ ಮಾಡಿದ್ದು. ರೊನಾಲ್ಡ್ ರೇಗನ್ ಒಬ್ಬ ಹಾಲಿವುಡ್ ನಟ. ಕೋಟಿಗಟ್ಟಲೆ ಜನರನ್ನು ತನ್ನ ಚಿತ್ರಗಳ ಮೂಲಕ ರಂಜಿಸಿದ ರೇಗನ್ ರಾಜಕಾರಣದಲ್ಲೂ ತಮ್ಮದೇ ಆದ ಛಾಪನ್ನು ಒತ್ತಿದ್ದರು. ರೇಗನ್ ಮತ್ತು ಗೋರ್ಬಚೋಫ್ ಮಧ್ಯೆ ಇದ್ದುದು ಒಂದು ಕಾಲದ ಧರ್ಮೇಂದ್ರ – ಹೇಮಾ ಮಾಲಿನಿ, ಸಲ್ಮಾನ್ – ಐಶ್ವರ್ಯ ನಡುವಿನ “ಕೆಮಿಸ್ಟ್ರಿ”. ಇವರುಗಳು ನಾಯಕರಾಗಿದ್ದ ಎರಡೂ ದೇಶಗಳೂ ಅಪನಂಬಿಕೆಯಿಂದ ತೊಳಲುತ್ತಿದ್ದರೆ ಇವರೀರ್ವರು ಮಾತ್ರ ಒಬ್ಬರನ್ನೊಬ್ಬರ ಕಾರ್ಯಶೈಲಿಯನ್ನು ಮೆಚ್ಚುತ್ತಾ ಒಂದು ಅಪೂರ್ವವಾದ ಸ್ನೇಹವನ್ನು ಹೆಣೆದಿದ್ದರು. ರೇಗನ್ ರವರು ಗೋರ್ಬಚೋಫ್ ರನ್ನು ಉದ್ದೇಶಿಸಿ Mr. Gorbachev, tear down this wall. ಬರ್ಲಿನ್ ಗೋಡೆ ಬಗ್ಗೆ ಅಮೆರಿಕೆಯ ಅಧ್ಯಕ್ಷ ನೊಬ್ಬ ಸೋವಿಯೆಟ್ ನಾಯಕನಿಗೆ ಈ ರೀತಿ ಸಂಬೋಧಿಸಿ ಹೇಳಬೇಕೆಂದರೆ ಮಾಮೂಲಿ ಕೆಲಸವಲ್ಲ. ಸಿನಿಮಾದ ಡಯಲಾಗ್ ಥರ ಹೊಡೆದೇ ಬಿಟ್ಟರು ರೇಗನ್ ವಿಶ್ವ ದಂಗಾಗುವಂತೆ.

ಗೋರ್ಬಚೋಫ್ ಮಾತು ಬಂತೆಂದರೆ ಗತಿಸಿಹೋದ ನನ್ನ ಪ್ರೀತಿಯ ಅಜ್ಜಿಯ ನೆನಪು ಬರುತ್ತದೆ. ಕನ್ನಡ ಭಾಷೆಯನ್ನ ಬಹು ಚೆನ್ನಾಗಿ ಮಾತನಾಡುತ್ತಿದ್ದ ಅವರು ತುಷಾರ, ಕಸ್ತೂರಿ, ಮಲ್ಲಿಗೆ, ಮಯೂರ, ಸುಧಾ ಮುಂತಾದ ಪತ್ರಿಕೆಗಳನ್ನು ತಪ್ಪದೆ ಓದುತ್ತಿದ್ದರು. ನನ್ನ ಅಜ್ಜಿಗೂ ನನ್ನ ಹಾಗೆಯೇ ವಿಶ್ವದ ಆಗುಹೋಗುಗಳ ಮೇಲೆ ಆಸಕ್ತಿ ಹೆಚ್ಚು. ಟೀವೀ ಪರದೆ ಮೇಲೆ ಗೋರ್ಬಚೋಫ್ ಕಾಣಿಸಿದ್ದೇ ತಡ ಕೇಳುತ್ತಿದ್ದರು, ಏನೋ ಅದು, ಅವನ ತಲೆ ಮೇಲೆ ಅದ್ಯಾವಾಗ ಕಾಗೆ ಕಕ್ಕ ಮಾಡಿತು ಎಂದು. ಗೋರ್ಬಚೋಫ್ ಅವರ ಕೂದಲಿಲ್ಲದ ನುಣ್ಣಗಿನ ತಲೆ ಮೇಲೆ ದೊಡ್ಡದಾದ ಮಚ್ಚೆ ಇತ್ತು. ಈ ಮಚ್ಚೆ world famous. ನೋಡಿದವರಿಗೆ ನನ್ನ ಅಜ್ಜಿಗೆ ತೋಚಿದಂತೆಯೇ ಕಾಗೆ ಕಕ್ಕ ಉದುರಿಸಿದ ಹಾಗೆ ಕಾಣುತ್ತಿತ್ತು. ಗೋರ್ಬಚೋಫ್ ರ ನೆನಪಾದಾಗ ಎರಡು ವರ್ಷಗಳ ಹಿಂದೆ ನಮ್ಮನ್ನು ಬಿಟ್ಟು ಹೋದ ಅಜ್ಜಿಯ ನೆನಪೂ ಸಹ ಬರುತ್ತದೆ.

ಯಾರ ಸೋಲು, ಯಾರ ಗೆಲುವು

ಬೆಂಗಳೂರು ನಗರ ಕಾತುರದಿಂದ ಕಾಯುತ್ತಿದ್ದ ಕ್ರಿಕೆಟ್ ವಿಶ್ವ ಕಪ್ ಪಂದ್ಯಾವಳಿಯ ಭಾರತ ಇಂಗ್ಲೆಂಡ್ ನಡುವಿನ ಹಣಾಹಣಿ ರೋಮಾಂಚಕಾರಿಯಾಗಿ ಕೊನೆಗೊಂಡಿತು. ಗೆಲ್ಲಲು ೩೩೮ ರ ಗುರಿಯನ್ನು ಕೆಚ್ಚೆಯಿಂದ ಸ್ವೀಕರಿಸಿದ ಅಂಡ್ರೂ ಸ್ಟ್ರಾಸ್ ನ ಬಂಟರು ಗೆಲುವಿನ ಹೊಸ್ತಿಲಿನವರೆಗೂ ಬಂದು ಬರಿಗೈಲಿ ಹೋದರು. ಬರಿಗೈಲಿ ಹೋದರು ಆದ್ರೆ  ಹೋಗಿದ್ದು ಮಾತ್ರ ಹಿಗ್ಗುತ್ತಾ, ಮುಗುಳ್ನಗುತ್ತಾ. ಭಾರತೀಯರ ಹೃದಯಗಳು ಅವರ ಬಾಯಿಗಳಿಗೆ ಬರುವಂತೆ ಮಾಡಿದ ನಮ್ಮ ಮಾಜಿ ಯಜಮಾನರುಗಳು ತಾವೆಂಥಾ ಆಟಗಾರರೆಂದು ವಿಸ್ಮಯಕಾರಕವಾಗಿ ತೋರಿಸಿದರು. ವಿಪರೀತ ಕೇಕೆ ಹಾಕುವ ಬೆಂಗಳೂರಿನ ಜನರ  ಸದ್ದಡಗಿಸುತ್ತೇವೆ ಎನ್ನುವಂಥ ಸ್ಪಿನ್ನೆರ್ “ಸ್ವಾನ್” ನ ಹೇಳಿಕೆಗೆ ನ್ಯಾಯ ಒದಗಿಸುವಂತೆ ಆಡಿದ ಇಂಗ್ಲೆಂಡ್ ನಾಯಕ ತನ್ನ ಜೀವನದ ಅತ್ಯುತ್ತಮ ಇನ್ನಿಂಗ್ಸ್ ಅನ್ನು ಬೆಂಗಳೂರಿಗರಿಗೆ ಉಣಬಡಿಸಿದ.

ಆದರೆ ೩೩೯ ಮಾಡಿದ್ದು ನಮ್ಮ ಸಾಹಸವಲ್ಲವೇ? ಅಷ್ಟೇ ಅಲ್ಲ ಆ ಗುರಿ ಮುಟ್ಟದಂತೆ ತಡೆಯುವಲ್ಲಿ ನಾವು ಯಶಸ್ವಿಯಾಗಲಿಲ್ಲವೇ? no. a resounding NO. ೩೩೯ ಮಾಡಿ ಮುನ್ನೂರರ ಒಳಗೆ ಅವರ ಇನ್ನಿಂಗ್ಸ್ ಅನ್ನು ಕವುಚಿ ಬಿಟ್ಟಿದ್ದರೆ ನಾವು ಹೆಮ್ಮೆ ಪಡಬಹುದಿತ್ತು. ಆ ರೀತಿ ಮಾಡದೆ ಶತ್ರು ನಮ್ಮ ಅಡುಗೆ ಮನೆ ತನಕ ನುಸುಳಲು ಬಿಟ್ಟಿದ್ದು ನಮ್ಮ ಸೋಲು. ಇಲ್ಲಿ ನಮ್ಮ ಬೌಲಿಂಗ್ ನ ಬಂಡವಾಳ ಬಟಾ ಬಯಲಾಯಿತು. mediocre bowling ಎನ್ನುವ ಹಣೆ ಪಟ್ಟಿ ಸಿಗುವಂತೆ ಮಾಡಿತು. ಹೌದು ಜಹೀರ್ ಖಾನ್ ಆಟದ ಗತಿಯನ್ನೇ ಬದಲಿಸಿದ ಆ ಅದ್ಭುತ ಓವರ್ ಅನ್ನು unleash ಮಾಡದೆ ಇದ್ದಿದ್ದರೆ ಇಂಗ್ಲೆಂಡ್ ಆಟಗಾರರು ಚಿನ್ನಸ್ವಾಮಿ ಮೈದಾನದ ಪ್ರದಕ್ಷಿಣೆ ಹಾಕುತ್ತಿದ್ದರು ಕೇಕೆ ಹಾಕುತ್ತಾ.  ತನ್ನ ವಯಸ್ಸು ನಾಚುವಂತೆ ಶತಕಗಳ ಮೇಲೆ ಶತಕ ಸಿಡಿಸುತ್ತಿರುವ ತೆಂಡೂಲ್ಕರ್ ಅವರ ಈ ಶತಕವೂ ಮತ್ತೊಂದು ಅಂಕಿ ಅಂಶವಾಗಿ ಉಳಿಯಿತೇ ವಿನಃ “ಅಂತಿಮ ನಗು” ವಿನ ರೋಮಾಂಚನವನ್ನು ನೀಡಲಿಲ್ಲ.

ಇಂಥ ಮಾತುಗಳನ್ನು ಎಂದಾದರೂ ಕೇಳಿದ್ದೀರಾ?

ಆರು ವರ್ಷ ಪ್ರಾಯದ ಮುಬೀನ ನನ್ನ ಸೋದರಿಯ ಮಗಳು. ಅವಳು ಮಾತನಾಡಲು ಶುರು ಮಾಡಿದಂದಿನಿಂದ ನಮ್ಮನ್ನು ದಂಗು ಬಡಿಸುವ ಮಾತುಗಳನ್ನೇ ಆಡುತ್ತಿದ್ದುದು. ಅರಳು ಹುರಿದಂತೆ ಮಾತನ್ನಾಡುತ್ತಿದ್ದ ಮುಬೀನಾ ಳನ್ನು ನನ್ನ ತಂದೆ ತಾಯಿ ತುಂಬಾ ಪ್ರೀತಿಸುತ್ತಿದ್ದರು. ಒಂದೆರಡು ದಿನಗಳ ರಜೆ ಸಿಕ್ಕರೂ ಅಪ್ಪ ಅವಳಿರುವಲ್ಲಿಗೆ ತಾವೇ ಹೋಗಿ ಕರೆದು ಕೊಂಡು ಬರುತ್ತಿದ್ದರು. ಒಂದೆರಡು ದಿನ ಇದ್ದು ಅವಳ ಮನೆಗೆ ಅವಳು ಮರಳಿದರೆ ಮಣೆ ಬಿಕೋ ಎನ್ನುತ್ತಿರುತ್ತದೆ. ಕೆಲವೊಮ್ಮೆ ತನ್ನ ಅಮ್ಮನನ್ನು ಬಿಟ್ಟು ಅವಳ ಅಜ್ಜಿಯ ಮನೆಯಲ್ಲಿ ಇರುತ್ತಿದ್ದ ಸಮಯದಲ್ಲಿ ನಿನ್ನ ಅಜ್ಜಿ ಚೆನ್ನಾಗಿ ನೋಡಿ ಕೊಳ್ಳುತ್ತಾರಾ ಎಂದು ಮನೆಯಲ್ಲಿ ಕೇಳುತ್ತಿದ್ದರು. ಯಾವಾಗಲೂ ಏನಾದರೊಂದು ಕಂಪ್ಲೇಂಟ್ ಇದ್ದೇ ಇರುತ್ತಿತ್ತು ಅವಳ ಹತ್ತಿರ. ಅಜ್ಜಿ ಹಾರ್ಲಿಕ್ಸ್ ಕೊಡೋಲ್ಲ, ಐಸ್ ಕ್ರೀಂ ಕೊಡೋಲ್ಲ ಎನ್ನುವಂಥವು .

ಮೊನ್ನೆ ನಮ್ಮ ಮನೆಯಲ್ಲಿ ಅವಳನ್ನು ಕೇಳಿದರು ನಿನ್ನ ಅಜ್ಜಿ (ಅವಳ ತಂದೆಯ ತಾಯಿ) ನಿನ್ನನ್ನು ಹೇಗೆ ನೋಡಿಕೊಳ್ಳುತ್ತಾರೆ ಅಂತ. ಆಗ ಅವಳು ಹೇಳಿದ್ದು, ನಾವು ಹೋಂ ವರ್ಕ್ ಮಾಡುವಾಗ ಮೊದಮೊದಲು ಚೆನ್ನಾಗಿ ತಪ್ಪಿಲ್ಲದೆ ಗುಂಡು ಗುಂಡಾಗಿ ಬರೆಯುತ್ತೇವೆ, ಸ್ವಲ್ಪ ಬರೆದಾದ ಮೇಲೆ ಬೇಕಾಬಿಟ್ಟಿ ಬರೆಯುತ್ತೆವಲ್ಲಾ ಹಾಗೆ ಅಜ್ಜಿಯೂ ಕೂಡಾ. ಮೊದ ಮೊದಲು ಚೆನ್ನಾಗಿ ನೋಡಿ ಕೊಳ್ಳುತ್ತಾರೆ, ಆಮೇಲೆ ಏನೂ ಕೊಡೋಲ್ಲಾ, ಎಂದು ಹೇಳಿ ಎಲ್ಲರನ್ನೂ ಬೇಸ್ತು ಬೀಳಿಸಿದಳು. ಅವಳ camparison ನೋಡಿ.

ಮುಬೀನಾ ಶಾಲೆಗೆ ಹೋಗುತ್ತಿದ್ದ ಆರಂಭದ ದಿನಗಳು. ವ್ಯಾನ್ ಡ್ರೈವರ್ ಮಕ್ಕಳನ್ನು ಉಸಿರುಗಟ್ಟುವ ರೀತಿಯಲ್ಲಿ ತುಂಬುತ್ತಿದ್ದ. ಇದನ್ನು ಕಂಡು ರೋಸಿದ ಅವಳು ಡ್ರೈವರ್ನನ್ನು ಕೇಳಿದಳು, ಏಯ್, ನಾವೇನು ಕೋಳಿ ಮರಿಗಳಾ ಈ ಥರಾ ತುಂಬಲು ಎಂದು. ಮಕ್ಕಳಿಗೆ ಮಾತುಗಳ ಟ್ರೈನಿಂಗ್ ಸಾಮಾನ್ಯವಾಗಿ ದೊಡ್ಡವರಿಂದ ಬಂದರೂ ಕೆಲವೊಮ್ಮೆ ನಾವು ಹೇಳಿರದಂಥ ಮಾತುಗಳನ್ನು ಹೇಳಿ ಬೆಚ್ಚಿ ಬೀಳಿಸುತ್ತಾರೆ ನಮ್ಮನ್ನು.

ಮಗಳ ಹೆಸರು “ಫೇಸ್ ಬುಕ್”

ಉತ್ತರ ಆಫ್ರಿಕಾ ಮತ್ತು ಮಧ್ಯಪ್ರಾಚ್ಯದ ಕ್ರಾಂತಿಗಳನ್ನು ಗಮನಿಸಿದವರಿಗೆ ಆ ಕ್ರಾಂತಿಗಳ ಹಿಂದೆ ಸಾಮಾಜಿಕ ವೆಬ್ ತಾಣಗಳು ಹೇಗೆ ಕೆಲಸ ಮಾಡಿದವು ಎಂದು ತಿಳಿದೇ ಇದೆ. ಈಜಿಪ್ಟ್ ದೇಶದ ಕ್ರಾಂತಿಯಲ್ಲಿ ಫೇಸ್ ಬುಕ್ ಮತ್ತು ಟ್ವಿಟ್ಟರ್ ಗಳ ಪಾತ್ರ ಹಿರಿದು.  ಮೊದಲ ಸಲ ತಂದೆಯಾದ ಜಮಾಲ್ ಇಬ್ರಾಹೀಂ ಹುಟ್ಟಿದ ಮಗುವಿಗೆ ಫೇಸ್ ಬುಕ್ ಎಂದು ಹೆಸರಿಟ್ಟು ಒಬ್ಬ ಸರ್ವಾಧಿಕಾರಿಯನ್ನು ಪದಚ್ಯುತಿಗೊಳಿಸುವಲ್ಲಿ ಸಕ್ರಿಯ ಪಾತ್ರ ವಹಿಸಿದ ಫೇಸ್ ಬುಕ್ ಗೆ ತನ್ನದೇ ಆದ ವಿಚಿತ್ರ ಆದರೂ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿದ. ಹಾಗೆಯೇ ಫೇಸ್ ಬುಕ್ ನ ಸ್ಥಾಪಕ Mark Zuckerberg  ಈ gesture ನಿಂದ ಇಂಪ್ರೆಸ್ ಆಗಿ ತನ್ನ ಮಗಳಿಗೆ ಏನಾದರೂ ಉಡುಗೊರೆ ಕಳಿಸಬಹುದು ಎನ್ನುವ ಆಸೆ ಕೂಡಾ ಇರಬಹುದೇ ಇಬ್ರಾಹೀಮನ ಮನದಾಳದಲ್ಲಿ?  

ಸುಮಾರು ಎಂಟು ಕೋಟಿ ಜನಸಂಖ್ಯೆಯ ಈಜಿಪ್ಟ್ ನಲ್ಲಿ ಫೇಸ್ ಬುಕ್ ಉಪಯೋಗಿಸುವವರು ಸುಮಾರು ೫೦ ಲಕ್ಷವಂತೆ.