ನಮ್ಮ ರಾಜ್ಯದ ರಾಜಕಾರಣ

ಕರ್ನಾಟಕದ ಕಿಣ್ಣರು ಗಣಿತ ಮತ್ತು ಜಾಗ್ರಫಿ ವಿಷಯಗಳಲ್ಲಿ ಬೇರೆಲ್ಲಾ ರಾಜ್ಯಗಳ ಕಿಣ್ಣ ರಿಗಿಂತ ಮುಂದೆ ಅಂತೆ – “ಅಧ್ಯಯನ” (ದಿನವೂ ನಾವು ಓದಿದ ದಿನಪತ್ರಿಕೆಯ ಅಧ್ಯಯನ).

ಗಡಗಡ ನಡುಗಿಸುವ ಗಣಿತ, ಜೋಂಪು ಹತ್ತಿಸುವ ಜಾಗ್ರಫಿ ವಿಷಯಗಳಲ್ಲಿ ನಮ್ಮ ಮಕ್ಕಳು ಮುಂದು ಎಂದರೆ ನಮ್ಮ “ಗುರು ದೇವೋಭವಃ” ಸಮುದಾಯ ಹಗಲು ರಾತ್ರಿ ಸಂಶೋಧನೆ ಮಾಡಿ ಹೊಸತನ್ನೇನಾದರೂ ಕಂಡು ಹಿಡಿದಿರಬೇಕು ಗಣಿತ ವನ್ನು amusing ಮಾಡಲು ಮತ್ತು ಜಾಗ್ರಫಿ ಯನ್ನು interesting ಆಗಿಸಲು. ಬಿಡ್ತು ಅನ್ನಿ, ಹಾಗೇನಿಲ್ಲ. ಸರಕಾರ ವಿದ್ಯೆ ಕೊಡುವ ಸಮುದಾಯಕ್ಕೆ ಕೊಡುವ ಸಂಬಳದ ಚೆಂದ ನೋಡಿದರೆ ಅಂಥ ಕಾಲ ಇನ್ನೂ ಬಹು ದೂರ. ಕಲಿಕೆಯಲ್ಲಿ innovation ತರುವ ಮಾತಿರಲಿ, ಬಾರುಕೋಲಿನ ಪ್ರಯೋಗ ಇಲ್ಲದೆ ಪಾಠ ಹೇಳಿದ್ದರೆ ಸಾಕಿತ್ತು ಶಿಕ್ಷಕರು. ಗಣಿತದಲ್ಲೂ, ಭೂಗೋಳದಲ್ಲೂ ನಮ್ಮ ಮಕ್ಕಳು ಮುಂದೆ ಎಂದ ಮಾತಿನಲ್ಲಿ ರಾಜಕಾರಣ ಅಡಗಿದೆ. ಪ್ರತಿಯೊಂದರಲ್ಲೂ ರಾಜಕಾರಣ ಕಾಣುವ ಸಮಾಜ ತಾನೆ ನಮ್ಮದು?

ಕರ್ನಾಟಕದ ರಾಜಕೀಯ ದಿನದಿಂದ ದಿನಕ್ಕೆ ಬಗೆಯ ಬಗೆಯ ಮನೋರಂಜನೆಯನ್ನು ಒದಗಿಸುತ್ತಿದ್ದು ಬಿಡುವಿನ ಸಮಯವನ್ನು ವ್ಯರ್ಥ ಮಾಡಲು ಟೀವೀಯ ಮೊರೆಯೋ, ಅಂತರ್ಜಾಲದ ಜಾಲದಲ್ಲೋ ಬೀಳಬೇಕಿಲ್ಲ ಕನ್ನಡಿಗ. ನಮ್ಮ ರಾಜಕಾರಣ ಎನ್ನುವುದು ನಂಬರ್ ಗೇಂ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾಜಪ ನಿಚ್ಚಳ ಬಹುಮತ ಸಾಧಿಸಿದರೂ ಅದನ್ನು ನೆಮ್ಮದಿಯಾಗಿ ಆಳಲು ಬಿಡಲು ಒಲ್ಲೆ ಎನ್ನುವ ಗುಂಪು ಆಗಾಗ ದೊಡ್ಡ ದೊಡ್ಡ ಸದ್ದನ್ನು ಮಾತ್ರವಲ್ಲ, ಎಲ್ಲಾ ಬಗೆಯ ಟ್ರಿಕ್ಕುಗಳನ್ನು ತನ್ನ ಬಗಲಿನಿಂದ ಎಸೆಯುತ್ತಲೇ ಇರುತ್ತದೆ. ಒಂದೆಂಟು ಅತೃಪ್ತ ಶಾಸಕರನ್ನು ನಂದಿ ಬೆಟ್ಟಕ್ಕೋ, ಅದರಲ್ಲೂ ಅತೃಪ್ತರಾದರೆ ಇನ್ನೂ ಹೆಚ್ಚಿನ excitement ಗಾಗಿ ಗೋವಾ ಪರ್ಯಟನೆ ಗೋ ಕಳಿಸಿ ನಮ್ಮ ಸನ್ಮಾನ್ಯ ಮು. ಮಂತ್ರಿಗಳು ಕಣ್ಣೇರು ಹಾಕುವಂತೆ ಮಾಡಿ sadist ಮಜಾ ತೆಗೆದು ಕೊಳ್ಳೋದು. ದಿನ ಬೆಳಗಾದರೆ ಸಾಕು ಅಂಕಿ ಸಂಖ್ಯೆಗಳು ಏರು ಪೇರಾಗುತ್ತವೆ, ಥೇಟ್ ನಮ್ಮ BSE Index ಥರ. ಸ್ಟಾಕ್ ಎಕ್ಸ್ಚೇಂಜ್ ರೀತಿ. ಬೆಳಿಗ್ಗೆ ಸಂಖ್ಯೆಯಲ್ಲಿ ವೃದ್ಧಿ ಕಂಡರೆ ಸಂಜೆಯಾಗುತ್ತಲೇ ಇಳಿತ. ಅಥವಾ “ವೈಸೀ ವರ್ಸಾ”. ಹೀಗೆ ದಿನವೂ ಕೂಡುತ್ತಾ, ಕಳೆಯುತ್ತಾ ಏರುಪೇರಾಗುವ, ಸಂಖ್ಯೆಗಳನ್ನು ನೆನಪಿನಲ್ಲಿ ಇಡಬೇಕು, ಇಲ್ಲದಿದ್ದರೆ ಎರಡು ತಿಂಗಳಿಗೊಮ್ಮೆ ಬರುವ ಟೆಸ್ಟು ಗಳಲ್ಲಿ ನಮ್ಮ ಮು. ಮಂತ್ರಿ ಯಾರು ಎಂದರೆ ತಿಳಿದಿರಲೇಬೇಕಲ್ಲ. ಇಲ್ಲದಿದ್ದರೆ ಸಿಗುವ ಒಂದೇ ಒಂದು ಅಂಕಕ್ಕೂ ಚ್ಯುತಿ. ಹೀಗೆ ಸಂಖ್ಯೆಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಹೆಣಗಾಡುತ್ತಾ ಗಣಿತವನ್ನು ಕರಗತವಾಗಿಸಿ ಕೊಂಡರು ನಮ್ಮ ಮಕ್ಕಳು. ಅದರೊಂದಿಗೆ ಸಂಭವನೀಯತೆ ಎನ್ನುವ ವಿಷ್ಯ ಕೂಡಾ.

ಒಂದು ಡೇರೆಯಿಂದ ಮತ್ತೊಂದು ಡೇರೆ ಗೆ ಕೆಲವು ಶಾಸಕರು ಜಿಗಿದರೆ ಯಾರು ಮು. ಮಂತ್ರಿ ಆಗಬಹುದು ಎನ್ನುವ ಸಂಭವನೀಯತೆ. ಸಂಭವನೀಯತೆಯಲ್ಲಿ ನಾಣ್ಯ ಚಿಮ್ಮುವ ಉದಾಹರಣೆ ಕೊಟ್ಟರೆ ರಾಜಕಾರಣದ ಸಂಭವನೀಯತೆಯಲ್ಲಿ ಡೇರೆ ಜಿಗಿಯುವ ಉದಾಹರಣೆ. ಅತೃಪ್ತ ಸದಸ್ಯರನ್ನು round the world, ಕ್ಷಮಿಸಿ, round the state ಟೂರಿಗೋ, ಅಥವಾ across the sate sojourn ಗೋ ಕಳಿಸಿದಾಗ ಜಾಗ್ರಫಿ ಸಹ ಮೂಡಿ ಬಂತು ತೆರೆಯ ಮೇಲೆ. ಯಾವ ಯಾವ ರೆಸಾರ್ಟ್ ಎಲ್ಲಿದೆ, ಅಡಗುತಾಣಗಳ ವಿಳಾಸ ಇವೆಲ್ಲವನ್ನೂ ತಿಳಿದಾಗ ಜಾಗ್ರಫಿ ಸಹ ಕರಗತವಾಗದೆ ಇದ್ದೀತೆ? ಅಷ್ಟೇ ಅಲ್ಲ, ಟೂರ್ ಹೊಡೆಸಿ, ಆಳಲು ಬೇಕಾದ ಮಾಂತ್ರಿಕ ಸಂಖ್ಯೆಯನ್ನು ಹೊಂದಿಸಿ, ನಂತರ ನಮ್ಮ ದೇಶದ ಅಧ್ಯಕ್ಷೆ ಯವರ ಹತ್ತಿರ ಪರೇಡ್ ಸಹ ಮಾಡಿಸಬೇಕು. ಅದಕ್ಕೆ ದಿಲ್ಲಿಗೆ ಹೋಗಬೇಕು. ಜಾಗ್ರಫಿ ಜ್ಞಾನ ವಿಸ್ತಾರ ಆಯಿತು ನೋಡಿ. ಆ ಪರೇಡ್ ಸಮಯ ಬರೀ ಮು. ಮಂತ್ರಿಗಳೂ, ಶಾಸಕ ಮಹೋದಯರೂ ಇದ್ದರೆ ಸಾಲದು, ಅವರನ್ನು ಕಾಯಲು ಪಕ್ಷದ ವತಿಯಿಂದ ವರಿಷ್ಠ ರೂ ಬರಬೇಕು, ವಿರೋಧೀ ಪಾಳಯ ದೂರದಲ್ಲಿ ನಿಂತು ಗೋವಾದ ಗೋಲ್ದನ್ ಬೀಚ್ ನ ಚಿತ್ರವನ್ನೋ, ನಾನ್ ಸ್ಟಾಪ್ ಅಂಕೆಗಳಿರುವ ಚೆಕ್ ನ ಫೋಟೋ ಕಾಪಿಯನ್ನೋ ತೋರಿಸಿ ಈಚೆ ಕಡೆ ಎಳೆದುಕೊಂಡು ಬಿಟ್ಟರೆ? ಪರೇಡ್ ಒಂದು ರೀತಿಯ ಮುಜುಗರ ತರುವ ಕಪ್ಪೆ ತೂಕವಾಗಿ ಪರಿವರ್ತನೆ ಆಗಬಾರದು ನೋಡಿ.

ನಮ್ಮ ಈ ರಾಜಕೀಯ ಅವ್ಯವಸ್ಥೆಗೆ ಪ್ರಜಾಪ್ರಭುತ್ವ ಎನ್ನುವ ಹೆಸರೇ ಒಂದು ‘misnomer’. ಅಪಪ್ರಯೋಗ. ಈ ವ್ಯವಸ್ಥೆಯಲ್ಲಿ ಪ್ರಜೆ ಪ್ರಭುವಾಗೋದು ಮತದಾನ ಕೇಂದ್ರದ ಕಡೆಗಿನ ನಡಿಗೆ ವೇಳೆ ಮಾತ್ರ. ಅವನನ್ನು ಕಳ್ಳ ನಗೆಯಿಂದ, ಓಲೈಸಲು ಡಜನ್ ಗಟ್ಟಲೆ ಜನ. ಮತದಾನವಾಯಿತೋ, ಆ ಕೂಡಲೇ ಅವನು ಹತಾಶ ಏಕಾಂಗಿ, ಮುಂದೆ ಅನಾವರಣಗೊಳ್ಳಲಿರುವ ನಾಟಕದ ಪರದೆ ಮುಂದೆ.

“ನೀವು ಕರೆಮಾಡಿದ ಚಂದಾದಾರರು…”

“ನೀವು ಕರೆಮಾಡಿದ ಚಂದಾದಾರರು ನಿಮ್ಮ ಯಾವುದೇ ಕರೆಗಳಿಗೂ ಪ್ರತಿಕ್ರಯಿಸುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ”. – ಮೊಬೈಲ್ ಇಟ್ಟುಕೊಂಡ ಯಾವನಿಗೂ ಈ ಸಂದೇಶ ಬಾಯಿ ಪಾಠವೇ. ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಹೆಚ್ಚೂ ಕಡಿಮೆ ಎಲ್ಲಾ ಸ್ಥಾನಗಳಿಗೂ ಸ್ಪರ್ದಿಸಿ ಒಂದರಲ್ಲಾದರೂ ಗೆದ್ದು ಖಾತೆ ತೆರೆಯುವ ಭಾರತದ ಪ್ರತಿಪಕ್ಷದ ಆಸೆಗೆ ಕೇರಳದ ಜನ ಓಗೊಡದೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರದ ಚುಕ್ಕಾಣಿ ನೀಡಿದ್ದಾರೆ.   ಹೀಗೆ, ಕೇರಳದಲ್ಲಿ ಈ ಸಲವೂ ಭಾಜಪಕ್ಕೆ ಸಿಕ್ಕ ಸಂದೇಶ ನಾವು ಕೇಳುವ ಮೊಬೈಲ್ ಸಂದೇಶದ ರೀತಿಯೇ ಆಯಿತು. ಈ unmistakable ಸಂದೇಶ ಕೊಟ್ಟವ ಮತದಾರ ಮಹೋದಯ. ನಿರಾಶೆಯ ಸಂಗತಿ ಏನೆಂದರೆ ಈ “ಸ್ವಲ್ಪ ಸಮಯ” ಕಾಯುವಿಕೆ ಐದು ವರ್ಷಗಳಷ್ಟು ಸುದೀರ್ಘ.

 ಅತ್ತ ತಮಿಳು ನಾಡಿನಲ್ಲೂ incumbent ಪಕ್ಷ ಸೋತು ಸುಣ್ಣವಾಯಿತು. 3G ಉಷ್ಣತೆ ಸ್ವಲ್ಪ ಜೋರಾಗಿಯೇ ತಗುಲಿಸಿಕೊಂಡ ದ್ರಾವಿಡ ಮುನ್ನೇಟ್ರಂ ಕಳಗಂ ತರಗೆಲೆಯಂತೆ ಉದುರಿತು ಜಯಲಲಿತಾ ಬಿರುಗಾಳಿಗೆ.  ಇಲ್ಲೂ ಭಾರತದ ಅತಿ ದೊಡ್ಡ ಪ್ರತಿಪಕ್ಷಕ್ಕೆ ಅತಿ ದೊಡ್ಡ ನಿರಾಶೆಯೇ ಕಾದಿತ್ತು. ಹೀಗೆ ಕರ್ನಾಟಕವನ್ನು ಬಿಟ್ಟರೆ ದಕ್ಷಿಣದ ಯಾವುದೇ ರಾಜ್ಯದ ಮತದಾರ ಈ ಪಕ್ಷಕ್ಕೆ ಮಣೆ ಹಾಕದಿರಲು ಕಾರಣವೇನು? ಹಾಗೆಯೆ ಕರ್ನಾಟಕದಲ್ಲಿ ಒಂದು ಕಾಲದಲ್ಲಿ ಶಿಕಾರಿಪುರದ ಕೇವಲ ಒಂದು ಸ್ಥಾನದಿಂದ ಹಿಡಿದು ಈಗಿನ ಅಧಿಕಾರದ ಗದ್ದುಗೆ ಏರುವ ಭಾಜಪದ ಪಯಣದ ಯಶಸ್ಸಿಗೆ ಕಾರಣವೇನು? ಇತರೆ ಪಕ್ಷಗಳ ಅಸಡ್ಡೆ, ಅಧಿಕಾರ ದಾಹದ ಕಾರಣ ಬೇಸತ್ತ ಕರುನಾಡಿನ ಮತದಾರ last straw ಆಗಿ ಭಾಜಪವನ್ನು ಅಧಿಕಾರಕ್ಕೆ ಏರಿಸಿರಬಹುದೇ?

ನಾರೀಮಣಿಗಳ ವಿಜೃಂಭಣೆ

ಮಿನಿ ಮಹಾ ಚುನಾವಣೆ ಎನ್ನಬಹುದಾದ ನಾಲ್ಕು ರಾಜ್ಯಗಳ ಚುನಾವಣೆಗಳಲ್ಲಿ ಮಹಿಳೆ ಅಭೂತ ಪೂರ್ವ ಯಶಸ್ಸನ್ನು ಸಾಧಿಸಿದ್ದಾಳೆ. ದಿಲ್ಲಿಯಿಂದ ಹಿಡಿದು ದಕ್ಷಿಣದ ತಮಿಳು ನಾಡಿನವರೆಗೆ ನಾರೀ ಮಣಿಗಳ ವಿಜೃಂಭಣೆ ಅಧಿಕಾರದ ಪಡಸಾಲೆಗಳಲ್ಲಿ.  ಸ್ವ ಸಾಮರ್ಥ್ಯದಿಂದ ಮಮತಾ ಬ್ಯಾನರ್ಜಿ, ಶೀಲಾ ದೀಕ್ಷಿತ್ ರಾಜಕಾರಣದಲ್ಲಿ ಮಿಂಚಿದರೆ ಸೋನಿಯಾ, ಜಯಲಲಿತಾ ಮತ್ತು ಮಾಯಾವತಿ ಪುರುಷರ ನೆರಳಿನ ಸಹಾಯದಿಂದ ಮಿಂಚಿದವರು. ಹೆಣ್ಣಿನ ಹುಟ್ಟು ಹೇಸಿಗೆ ಮತ್ತು ತಾತ್ಸಾರ ಹುಟ್ಟಿಸುವ, ಗರ್ಭದಲ್ಲೇ ಅವಳನ್ನು ಹೊಸಕಿ ಹಾಕುವ ಅತ್ಯಂತ ತ ಕಳವಳಕಾರೀ ವಿದ್ಯಮಾನಗಳನ್ನು ನಾವು ದಿನವೂ ಕಾಣುತ್ತಿರುವಾಗ ರಾಜಕೀಯದಲ್ಲಿ ಸ್ತ್ರೀಯರ ಯಶಸ್ಸು ನಿಜಕ್ಕೂ ಸಂತಸವನ್ನು ಮೂಡಿಸುತ್ತದೆ. ಈ ಮಹಿಳಾ ಮಣಿಗಳು ಮಾಡಬೇಕಾದ ಮೊದಲ ಕೆಲಸವೆಂದರೆ ಮೇಲೆ ಹೇಳಿದ ಹೆಣ್ಣಿನ ಭ್ರೂಣ ಹತ್ಯೆ ಮತ್ತು ಹೆಣ್ಣಿನ ಮೇಲೆ ನಡೆಯುವ ಅವ್ಯಾಹತ ಶೋಷಣೆಯ ವಿರುದ್ಧ ಸಮರವನ್ನೇ ಸಾರಿ ಜನರಲ್ಲಿ ಹೆಣ್ಣು ನಿಕೃಷ್ಟಳಲ್ಲ, ಪುರುಷನಷ್ಟೇ ಬಲಿಷ್ಠಳು ಎನ್ನುವ ಸತ್ಯವನ್ನು ಮನಗಾಣಿಸುವುದು.

ಘಟನೆಗಳ ಸಾಮ್ಯತೆ

ಅಮೆರಿಕೆಯ ೯/೧೧ ಮತ್ತು ಭಾರತದ ೨೬/೧೧ ರ ಆಕ್ರಮಣಗಳ ನಡುವೆ ಸಾಮ್ಯತೆ ಇಲ್ಲ ಅಂತ ಅಮೆರಿಕೆಯ ಅಂಬೋಣ. ೯/೧೧/೨೦೦೧ ರಲ್ಲಿ ಅಮೆರಿಕೆಯ ವಿರುದ್ಧ ನಡೆದ ಆಕ್ರಮಣಕ್ಕೂ ನಮ್ಮ ದೇಶದಲ್ಲಿ ಪಾಕಿ ಕೊಲೆಗಡುಕರು ನಡೆಸಿದ ೨೬/೧೧/೨೦೦೮ ರ ಆಕ್ರಮಣಕ್ಕೂ ಸಾಮ್ಯತೆ ಇದೆಯೋ ಇಲ್ಲವೋ ಎಂದು ಸ್ವಲ್ಪ ನೋಡೋಣ.

ಅಮೆರಿಕನ್ನರು ಇಸವಿ ಬರೆಯುವಾಗ ಮೊದಲು ತಿಂಗಳ ನ್ನೂ ನಂತರ ದಿನವನ್ನೂ, ಕೊನೆಗೆ ವರ್ಷವನ್ನೂ ಬರೆಯುತ್ತಾರೆ. ನಾವು ಭಾರತೀಯರು ಮೊದಲು ದಿನವನ್ನೂ, ನಂತರ ತಿಂಗಳನ್ನೂ, ಕೊನೆಗೆ ವರ್ಷವನ್ನೂ ಬರೆಯುತ್ತೇವೆ. ರೂಢಿ ಹೀಗಿರುವಾಗ, ಬಹುಶಃ ಇದನ್ನು ಗಣನೆಗೆ ತೆಗೆದು ಕೊಂಡೋ ಏನೋ  ಅಮೆರಿಕನ್ನರು ಹೇಳಿದ್ದು ಇವೆರಡಕ್ಕೂ ಸಾಮ್ಯತೆ ಇಲ್ಲ ಎಂದು ಅಥವಾ ಸಾಮ್ಯತೆ ಇಲ್ಲ ಎನ್ನುವ ಹೇಳಿಕೆಗೆ economical angle ಕೊಟ್ಟು ನೋಡಿದಾಗ ಅಮೆರಿಕೆಯ ಧಾಳಿಯಲ್ಲಿ ಸತ್ತಿದ್ದು ಶ್ರೀಮಂತರೂ (ನಮ್ಮೊಂದಿಗೆ ಹೋಲಿಸಿಕೊಂಡಾಗ), ಬಹುತೇಕ ಅಮೆರಿಕನ್ನರೂ ಆಗಿದ್ದು ೨೬/೧೧ ರ ಧಾಳಿಯಲ್ಲಿ ಸತ್ತವರು ಬಹುತೇಕ ದರಿದ್ರರೂ, ಯಕಃಶ್ಚಿತ್ ಭಾರತೀಯರು ಎನ್ನುವ ತಾರತಮ್ಯವೂ ಅಡಗಿರಬಹುದೇ? ಗಾಯಕ್ಕೆ ಉಪ್ಪನ್ನು ಉಜ್ಜುವ ಅಮೆರಿಕೆಯ ಈ ಮಾತು ಸಾಲದು ಎನ್ನುವಂತೆ, ಅಮೆರಿಕೆಯ ಹಾಗೆ ನಾವೂ ಪಾಕ್ ಗಡಿ ಅತಿಕ್ರಮಿಸಿ ಕೊಲೆಗಡುಕರನ್ನು ಸದೆ ಬಡಿಯಬೇಕು ಎನ್ನುವ ಬೇಡಿಕೆಗೆ ನಮ್ಮ ಘನ ಸರಕಾರ ಉಲಿದಿದ್ದು “ಅಮೆರಿಕೆಯ ಗಡಿ ಅತಿಕ್ರಮಣದಿಂದ ಈಗಾಗಲೇ ಕಸಿವಿಸಿ ಅನುಭವಿಸುತ್ತಿರುವ ಪಾಕಿಗೆ ಮತ್ತಷ್ಟು ಕಸಿವಿಸಿ ಯುಂಟು ಮಾಡೋ ಯಾವ ಕೆಲಸವನ್ನೂ ನಾವು ಮಾಡೋಲ್ಲ” ಅಂತ. ಅಂದರೆ ನೀವು ನಮ್ಮ ಬೀದಿಗಳಲ್ಲಿ, ರೇಲ್ವೆ ನಿಲ್ದಾಣಗಳಲ್ಲಿ ನಿಮಗೆ ತೋಚಿದ ಹಾಗೆ ರಕ್ತ ಹರಿಸಿದರೂ ನಾವು ಸುಮ್ಮನೆ ಸಹಿಸುತ್ತೇವೆ, ನಮ್ಮ ಜನರ ಪ್ರಾಣ ಹಾನಿಗಿಂತ ನಿಮಗಾಗಬಾರದ ಕಸಿವಿಸಿ ನಮಗೆ ಮುಖ್ಯ, ಇದು ನಮ್ಮ ಸರಕಾರದ ಧೋರಣೆ.

ತೇರೆ ಬಿನ್ ಲಾದೆನ್…

ಲಾದೆನ್, ನೀನಿಲ್ಲದೆ… ಸಿನೆಮಾ ದೊಡ್ಡ ಸುದ್ದಿ ಮಾಡಿತು ನಮ್ಮ ದೇಶದಲ್ಲಿ. ಲಾದೆನ್ ಬಗೆಗೆ ಅಮೆರಿಕೆಯ ಅತಿ ಆಸಕ್ತಿಯ ಕುರಿತು ರಚಿಸಿದ ಈ ಚಿತ್ರ ವೀಕ್ಷಕರನ್ನು ರಂಜಿಸಿತು. ಲಾದೆನ್ ನ         enigma ರಾಜಕಾರಣಿ, ಸುದ್ದಿ ಪಂಡಿತರನ್ನು ಮಾತ್ರವಲ್ಲ ಚಿತ್ರರಂಗವನ್ನೂ ಬಾಧಿಸಿತು. ಹತ್ತು ಹಲವು ವರ್ಷಗಳಿಂದ ಒಂದೇ ಸಮನೆ ಅಮೇರಿಕಾ ಲಾದೆನ್ ಗಾಗಿ ಪ್ರಪಂಚ ಜಾಲಾಡಿದರೂ ಸಿಗದೇ ಹತಾಶವಾಗಿದ್ದಾಗ ಇದ್ದಕ್ಕಿದ್ದಂತೆ, ಯಾವ ಸುಳಿವೂ, ಮುನ್ಸೂಚನೆಯೂ ಇಲ್ಲದೆ justice is done, Laden is gone ಎಂದು ಬೆಳ್ಳಂ ಬೆಳಗ್ಗೆ  ಕೇಳಿ ತಬ್ಬಿಬ್ಬಾದ ನಮಗೆ ಲಾದೆನ್ ಸಾವು ಸಿನಿಮೀಯ ರೀತಿ ಎಂದು ಅನ್ನಿಸಿದರೆ ತಪ್ಪಾಗಲಾರದು. ಹತ್ತು ವರ್ಷಗಳಿಂದ ಅತ್ಯಾಧುನಿಕ ಉಪಗ್ರಹಗಳಿಂದ ಹಿಡಿದು ಅಮೇರಿಕನ್ ಸೈನಿಕರ high tech binocular ಗಳಿಗೂ ಸಿಗದೇ ತಪ್ಪಿಸಿಕೊಳ್ಳುತ್ತಿದ್ದ ಬಿನ್ ಲಾದೆನ್ ದಿಢೀರನೆ ಕೊಲ್ಲಲ್ಪಟ್ಟ ಎಂದರೆ ಒಂದು ರೀತಿಯ ಸಿನಿಮೀಯ ತಾನೇ?  

ಲಾದೆನ್ ಬರೀ ಅಮೆರಿಕೆಗೆ ಮಾತ್ರವಲ್ಲ, ನಮ್ಮ ದೇಶದಲ್ಲೂ ಕುತೂಹಲ, ಭಯ, ಆಕ್ರೋಶ ಬರಿಸಿದ ಹೆಸರು. ಅಮೆರಿಕೆಯ ಮೇಲೆ ಮತ್ತು ವಿಶ್ವದ ಇತರೆ ನಗರಗಳಲ್ಲಿ ತನ್ನ ಸಾವಿನ ಏಜೆಂಟರನ್ನು ಹರಿಬಿಟ್ಟ ಲಾದೆನ್ ಕೊನೆಗೂ ಸೆಣೆಸುತ್ತಾ  ಉರುಳಿ ಬಿದ್ದ ಅಮೆರಿಕೆಯ ನಾವಿಕ ದಳದ ಯೋಧರ ಗುಂಡುಗಳಿಗೆ,  ಪಾಕಿಸ್ತಾನದ “ಅಬೋಟ್ಟಾಬಾದ್” ನಗರದಲ್ಲಿ.

ಅಬೋಟ್ಟಾಬಾದ್, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಿಂದ ಕೇವಲ ೩೫ ಮೈಲು ದೂರ ಇರುವ, ಪ್ರತಿಷ್ಠಿತ ಸೈನಿಕ ತರಬೇತಿ ಕಾಲೇಜು ಹೊಂದಿದ ಈ ನಗರದಲ್ಲಿ ಬಿನ್ ಲಾದೆನ್ ಸುಮಾರು ಐದು ವರ್ಷಗಳಿಗೂ ಹೆಚ್ಚು ಕಾಲ ಅವಿತು ಕೊಂಡಿದ್ದ ಎಂದರೆ ಯಾರೂ ದಂಗಾಗುವರು. ಅಮೆರಿಕೆಯಂತೂ ಮೂರ್ಛೆ ಬೀಳುವುದೊಂದು ಬಾಕಿ. ಭಯೋತ್ಪಾದನೆ ತಡೆಯಲು, ಲಾದೆನ್ ಕ್ರುತ್ಯಗಳನ್ನು ತಡೆಯಲು ಪಾಕಿಸ್ತಾನದ ಬೆಂಬಲ ಪಡೆದಿದ್ದ ಅಮೇರಿಕಾ ಈ ಸಹಾಯಕ್ಕೆ ಕೊಡುತ್ತಿದ್ದ ಫೀಸು ವರ್ಷಕ್ಕೆ ೩ ಬಿಲ್ಲಿಯನ್ ಡಾಲರ್. ಯಾಚಕ ದೇಶ. ಇಂಥದ್ದೇ ಮತ್ತೊಂದು ಯಾಚಕ ದೇಶ ಇಸ್ರೇಲ್. ಬಿನ್ ಲಾದೆನ್ ನನ್ನು ಹುಡುಕುತ್ತಿದ್ದೇವೆ, ತಾಲಿಬಾನಿ ಗಳನ್ನು ಸದೆ ಬಡಿಯುತ್ತಿದ್ದೇವೆ ಎಂದು ಸುಳ್ಳು ಸುಳ್ಳೇ ಭರವಸೆ ನೀಡುತ್ತಾ ಅಮೆರಿಕೆಯ ಡಾಲರುಗಳ ಲಂಚವನ್ನು ಲಜ್ಜೆಯಿಲ್ಲದೆ ಸ್ವೀಕರಿಸಿದ ಪಾಕ್ ಅಮೆರಿಕೆಗೆ ಮೋಸ ಮಾಡಿತೆಂದೇ ವಿಶ್ವದ, ಅಮೆರಿಕನ್ನರ ನಂಬಿಕೆ. ಈ ರೀತಿ ಪುಕ್ಕಟೆ ಯಾಗಿ ಸಿಗುತ್ತಿದ್ದ ಸಂಪತ್ತನ್ನು ನುಂಗುತ್ತಿದ್ದ ಪಾಕಿಗೆ ಲಾದೆನ್ ಚಿನ್ನದ ತತ್ತಿ ಇಡುವ ಕೋಳಿ. main source of income. ಪಾಪ, ಲಾದೆನ್ ಸಾವಿನಿಂದ ದೊಡ್ಡ, ಭರಿಸಲಾರದ ನಷ್ಟ ಪಾಕಿಗೆ.  

ಪಾಕಿಸ್ತಾನ ಮಾತ್ರ ತನಗೆ ಲಾದೆನ್ ನ ಇರುವಿನ ಬಗ್ಗೆ ಗೊತ್ತೇ ಇಲ್ಲ ಎಂದು ಆಣೆ ಹಾಕಿ ಹೇಳಿದರೂ circumstantial evidence ಇದಕ್ಕೆ ವ್ಯತಿರಿಕ್ತ. ಈ ವಿವಾದದಲ್ಲಿ ಮತ್ತೊಂದು ಸಮಸ್ಯೆ ಇದೆ. ಅಮೇರಿಕಾ ಮತ್ತು ಪಾಕಿಸ್ತಾನ chronic liars. ಶುದ್ಧ ಸುಳ್ಳರು. ಈ ಇಬ್ಬರ ತಗಾದೆ ಬಗೆಹರಿಸಲು ಇಲ್ಲಿದೆ ಲಿಟ್ಮಸ್ ಟೆಸ್ಟ್. ಲಾದೆನ್ ಎಲ್ಲಿದ್ದಾನೆ ಎನ್ನುವುದು ಪಾಕಿಗೆ ತಿಳಿದಿತ್ತೆ? ಪಾಕಿನ ಸಹಾಯವಿಲ್ಲದೆ ಅಮೆರಿಕೆಯ ಬ್ಲಾಕ್ ಹಾಕ ಹೆಲಿಕಾಪ್ಟರ್ ಗಳು ಹೇಗೆ ತಾನೇ ಲಾದೆನ್ ಇರುವಲ್ಲಿಗೆ ಬರಲು ಸಾಧ್ಯ? ಅಲ್ಕೈದಾ ಸಂಘಟನೆಯ ಕೆಂಗಣ್ಣಿಗೆ ಗುರಿಯಾಗಬಹುದು ಎನ್ನುವ ಭೀತಿ ಪಾಕಿಗೆ ತಾನು ಈ ಸಾಹಸದಲ್ಲಿ ಪಾಲು ಗೊಂಡಿಲ್ಲ ಎಂದು ಹೇಳಲು ಪ್ರೇರೇಪಿಸುತ್ತಿರಬಹುದೇ? ಪಾಕಿಸ್ತಾನದ ಪರಿಸ್ಥತಿ ಅಡಕ್ಕೊತ್ತರಿ ಯಲ್ಲಿ ಸಿಕ್ಕ ಅಡಿಕೆಯಂತೆ. ಲಾದೆನ್ ಇರುವ ಸ್ಥಳ ತೋರಿಸಿ ಅಮೆರಿಕೆಗೆ ಸಹಕಾರ ನೀಡಿದೆ ಎಂದರೆ ಅಲ್ ಕೈದಾ ಬಿಡೋಲ್ಲ, ಲಾದೆನ್ ಎಲ್ಲಿದ್ದಾನೆ ಎಂದು ತನಗೆ ತಿಳಿದಿಲ್ಲ ಎಂದರೆ ಅಮೇರಿಕಾ ಬಿಡೋಲ್ಲ. ಸುಮಾರು  ಐದು ವರ್ಷಗಳ ಕಾಲ ದೊಡ್ಡ ಪಾಕಿಸ್ತಾನದ ರಾಜಧಾನಿಯ ಹಿತ್ತಲಿನಲ್ಲಿ,  ಬಂಗಲೆಯೊಂದರಲ್ಲಿ ವಾಸಿಸುತ್ತಿದ್ದ ಲಾದೆನ್ ಬಗ್ಗೆ ಪಾಕ್ ಸೈನ್ಯಕ್ಕೆ, ಸರಕಾರಕ್ಕೆ ತಿಳಿದಿಲ್ಲ ಎಂದರೆ ದೊಡ್ಡ ಆಶ್ಚರ್ಯವೇ. ಒಂದು ವೇಳೆ ಪಾಕಿಗೆ ಲಾದೆನ್ ಪಾಕಿನಲ್ಲಿ ಇರುವ ಅರಿವು ಇಲ್ಲದಿದ್ದರೆ ಅಮೇರಿಕಾ ತಾನು ನೀಡುವ ಉದಾರ ಧನ ಸಹಾಯ ಮುಂದುವರೆಸಬಹುದು. ಅಥವಾ ಲಾದೆನ್ ಪಾಕಿಸ್ತಾನದಲ್ಲಿ ಇರುವುದನ್ನು ಅಮೆರಿಕೆಗೆ ತಿಳಿಸದೇ ಡಬಲ್ ಗೇಂ ಆಡಿದ್ದರೆ ಪಾಕಿಸ್ತಾನವನ್ನು ದಾರಿಗೆ ತರುವ ಕೆಲಸ ಅಮೇರಿಕಾ ಶೀಘ್ರ ಶುರು ಮಾಡಬೇಕು. ಇದೇ ಟೆಸ್ಟು. Litmus ಟೆಸ್ಟು.    

ಬಿನ್ ಲಾದೆನ್ ಇಲ್ಲದೆ ಪಾಕ್ ಹೇಗೆ ತಾನೇ ಜೀವಿಸೀತು ಎನ್ನುವುದೀಗ ಆಸಕ್ತಿಕರ ಪ್ರಶ್ನೆ. ಪ್ರೀತೀ,  ನೀನಿಲ್ಲದೆ ನಾ ಹೇಗಿರಲಿ… ಎಂದು ಶೋಕ ಗೀತೆ ಹಾಡುತ್ತಿರಬಹುದೇ ಪಾಕಿಗಳು?

೨೦೦೧ ರ ಅಮೆರಿಕೆಯ ವಿರುದ್ಧದ ಧಾಳಿಗೆ ಬಿನ್ ಲಾದೆನ್ ನನ್ನು ನೇರ ಹೊಣೆಯಾಗಿರಿಸಿದ ಜಾರ್ಜ್ ಬುಶ್, ಬಿನ್ ಲಾದೆನ್ wanted, dead or alive ಎಂದು ಘೋಷಿಸಿದ. ಅಮೆರಿಕೆಯ ಮೇಲೆ ನಿರ್ದಯೀ, ಭೀಕರ ಧಾಳಿ ಮಾಡಿ ತಾನು ಒಂದು ದಿನ ಪೂರ್ತಿ ರಹಸ್ಯ ಅಡಗು ತಾಣವೊಂದರಲ್ಲಿ ದಿನ ಕಳೆಯುವಂತೆ ಮಾಡಿದ ಬಿನ್ ಲಾದೆನ್ ನ ತಲೆಗೆ ೨೫ ಮಿಲ್ಲಿಯನ್ ಡಾಲರ್ ಮೊತ್ತದ ಬೆಲೆಯನ್ನೂ ಕಟ್ಟಿದ ಬುಶ್.  ಹೊಗೆಯುಗುಳುತ್ತಾ ನೆಲಕ್ಕುರುಳಿದ ನ್ಯೂಯಾರ್ಕ್ ನ ಗಗನ ಚುಂಬಿ ಕಟ್ಟಡಗಳು ಅಮೆರಿಕನ್ನರ ಚಿತ್ತ ಕಲಕಿದವು. ಕ್ರುದ್ಧ ಅಮೇರಿಕಾ ಬಿನ್ ಲಾದೆನ್ ಅಡಗಿದ್ದ ಆಫ್ಘಾನಿಸ್ತಾನ ವನ್ನು ಆಕ್ರಮಣ ಮಾಡಿತು. ಬಿನ್ ಲಾದೆನ್ ಎಲ್ಲಿದ್ದರೂ ಹೊಗೆ ಹಾಕಿ ಹೊರತೆಗೆಯುತ್ತೇನೆ ಎಂದು ಘರ್ಜಿಸಿದ ಬುಶ್ ಆಫ್ಘಾನಿಸ್ತಾನದ ಗುಡ್ಡಗಾಡು ಗಳನ್ನು ಮಾತ್ರವಲ್ಲ ಅಲ್ಲಿನ ತೋರಾ ಬೋರಾ ಗವಿ ಸಮುಚ್ಛಯಗಳನ್ನು ಜಾಲಾಡಿದ. ಸೋವಿಯೆಟ್ ಸೇನೆಗೆ ಚಳ್ಳೆ ಹಣ್ಣು ತಿನ್ನಿಸಿದ್ದ, ಸ್ವತಃ ಅಮೆರಿಕನ್ನರಿಂದಲೇ ತರಬೇತಿ ಪಡೆದ, ಸ್ವಾತಂತ್ರ್ಯ ಹೋರಾಟಗಾರ ಎಂದು ರೋನಾಲ್ಡ್ ರೇಗನ್ನರಿಂದ ಹೊಗಳಿಸಿಕೊಂಡಿದ್ದ  ಬಿನ್ ಲಾದೆನ್ ರಂಗೋಲಿ ಕೆಳಗೆ ತೂರಿಕೊಳ್ಳುವುದನ್ನು ಕರಗತ ಮಾಡಿಕೊಂಡ.  

ಬಿನ್ ಲಾದೆನ್,  wanted, dead or alive ಎಂದ ಅಮೇರಿಕಾ ಲಾದೆನ್ ಇರುವ ಮನೆಯ ಮೇಲೆ ಧಾಳಿ ಮಾಡಿ, ೪೦ ನಿಮಿಷಗಳ ಕಾಳಗದಲ್ಲಿ ಎರಡು ಗುಂಡುಗಳನ್ನು ಲಾದೆನ್ ತಲೆಗೆ ಸಿಡಿಸಿ ಕೊಂದಿದ್ದಾರೂ ಏಕೆ? ಅವನನ್ನು ಜೀವಂತ ಸೆರೆ ಹಿಡಿದು, ಅಮೆರಿಕೆಯ USS COLE , ಆಫ್ರಿಕಾದ ದಾರುಸ್ಸಲಾಮ್, ಸ್ಪೇನ್ ನ MADRID, ಲಂಡನ್, ಸೌದಿ ಅರೇಬಿಯಾದ ದಹರಾನ್, ಇರಾಕ್, ಸೋಮಾಲಿಯಾ, ಇಂಡೋನೇಷ್ಯಾದ ಬಾಲಿ ಮುಂತಾದ ನಗರಗಳ ಮೇಲೆ ಧಾಳಿ ಮಾಡಿದ ಈತನನ್ನು ವಿಚಾರಣೆ ಮಾಡಬಹುದಿತ್ತಲ್ಲ. ಅಮೆರಿಕೆಯ ಕಾರ್ಯ ವೈಖರಿ ಆ ದೇಶದಷ್ಟೇ ನಿಗೂಢ. ಕ್ರಿಸ್ಟಫರ್ ಕೊಲಂಬಸ್ ಕಂಡು ಹಿಡಿಯುವವರೆಗೂ ನಿಗೂಢವಾಗಿದ್ದ ದೇಶವಲ್ಲವೇ ಅಮೇರಿಕಾ? ಈತನನ್ನು ಸೆರೆ ಹಿಡಿದು ಅಮೇರಿಕಾ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿ ಕೊಳ್ಳಲು ಇಷ್ಟ ಪಡಲಿಲ್ಲ. ವಿಚಾರಣೆ ವೇಳೆ ಬಿನ್ ಲಾದೆನ್ ಬಾಯಿ ಬಿಟ್ಟರೆ ತಾವು ಕೇಳಲು ಇಚ್ಛಿಸುವುದಕ್ಕಿಂತ ಸ್ವಲ್ಪ ಹೆಚ್ಚನ್ನೇ ಬಡಬಡಿಸಬಹುದು. ಈ ಕಸಿವಿಸಿಯಿಂದ ಪಾರಾಗಲು ಇರುವ ಒಂದೇ ದಾರಿ ಎಂದರೆ ನೇರ ಆಕ್ರಮಣ. ಈ ಆಕ್ರಮಣದಲ್ಲಿ ಅಮೇರಿಕಾ ಯಶಸ್ಸನ್ನು ಕಂಡಿತು.         

ತಾನು ಕರಿಯನಾದ ಒಂದೇ ಕಾರಣಕ್ಕೆ ದಿನವೂ ಬಿಳಿ ಅಮೆರಿಕನ್ನರ ಕುಹಕಕ್ಕೆ, ಅವಹೇಳನಕ್ಕೆ  ಗುರಿಯಾಗುತ್ತಿದ್ದ ಒಬಾಮ ಕೊನೆಗೆ ತನ್ನ ಜೀವನದ ಅತಿ ದೊಡ್ಡ ಅವಮಾನವನ್ನು ಎದುರಿಸಬೇಕಾಯಿತು. ಒಬಾಮಾರ ಜನನ ಪ್ರಮಾಣ ಪತ್ರವನ್ನು ಬಲ ಪಂಥೀಯ ರಿಪಬ್ಲಿಕನ್ ಪಕ್ಷ ಕೇಳಿತು. ಒಬಾಮಾ ತನ್ನ ಜನನ ಪ್ರಮಾಣ ಪತ್ರದ ಜೊತೆ ಜೊತೆಗೇ ಅಮೆರಿಕನ್ನರ ಸಿಂಹಸ್ವಪ್ನನಾಗಿದ್ದ ಲಾದೆನ್ ನ ಸಾವಿನ ಪ್ರಮಾಣ ಪತ್ರವನ್ನೂ ಅಮೆರಿಕನ್ನರಿಗೆ ನೀಡಿ ತಾನು ಕಾರ್ಯಕ್ಷಮತೆಯಲ್ಲಿ ಯಾವ ಬಿಳಿ ಅಧ್ಯಕ್ಷನಿಗೂ ಕಡಿಮೆಯಲ್ಲ ಎನ್ನುವುದನ್ನು ತೋರಿಸಿ ಕೊಟ್ಟರು.   

ಒಸಾಮಾ ಬಿನ್ ಮುಹಮ್ಮದ್ ಬಿನ್ ಅವಾದ್ ಬಿನ್ ಲಾದೆನ್.  ೫೪ ವರ್ಷ ಪ್ರಾಯದ, ಆರಡಿ ಮೂರಿಂಚು ಎತ್ತರದ ಸ್ಫುರದ್ರೂಪಿ ಮತ್ತು ಆಗರ್ಭ ಶ್ರೀಮಂತ ಆಫ್ಘನ್ ಗುಡ್ಡ ಗಾಡಿನ ಜನರ ವಿಶ್ವಾಸ, ಪ್ರೀತಿ, ಅಭಿಮಾನ ಗಳಿಸಲು ಕಾರಣವಾಗಿದ್ದಾದರೂ ಏನು? ಜನರೊಂದಿಗೆ ಸುಲಭವಾಗಿ, ಆತ್ಮೀಯತೆಯಿಂದ ಬೆರೆಯುತ್ತಿದ್ದ ಈತ ಸೌಮ್ಯ ಮಾತುಗಾರಿಕೆಯಿಂದ, ತನ್ನ ಉದಾರ ಸ್ವಭಾವದಿಂದ ಅಲ್ಲಿನ ಯುವಜನರ ಮನ ಗೆದ್ದಿದ್ದ. ಕೋಟ್ಯಾಧೀಶ ಮನೆತನದಿಂದ ಬಂದ ಈತ ಐಶಾರಾಮದ ಬದುಕನ್ನು ಬಿಟ್ಟು ಆಫ್ಘನ್ ಗುಡ್ಡಗಾಡಿನಲ್ಲಿ ಒಣಗಿದ ಚಪಾತಿ ತಿನ್ನುತ್ತಾ ತಮ್ಮೊಂದಿಗೆ ಇರುತಿದ್ದ ಈತನನ್ನು ಕಂಡು ಜನ ಮಾರುಹೋದರು. ಸೋವಿಯೆಟ್ ಸೈನ್ಯದೊಂದಿಗೆ ಹೋರಾಡಿದ ಈತ ಓರ್ವ ಸೈನಿಕನೊಂದಿಗೆ hand to hand combat ನಲ್ಲಿ ಸೈನಿಕನ್ನು ಕೊಂದು ಅವನ kalashnikov ಬಂದೂಕನ್ನು ವಶಪಡಿಸಿ ಕೊಂಡಿದ್ದ. ಈ ಬಂದೂಕು ಅವನ ಅಭಿಮಾನದ ಸ್ವತ್ತಾಗಿತ್ತು.

ಈತ ಆರಂಭಿಸಿದ ಅಲ್ ಕೈದಾ ಒಂದು ಸಂಘಟನೆಯೋ ಆಗಿರದೆ ಒಂದು ತೆರನಾದ ideology ಆಗಿತ್ತು. ಸದಸ್ಯ ಶುಲ್ಕವಾಗಲೀ, ಯಾವುದೇ formal induction ಆಗಲಿ ಬೇಕಿಲ್ಲದ ಈ ವಿಚಾರಧಾರೆಗೆ ಮೂರು ಅಂಶಗಳೇ ಉರುವಲಾಗಿ ಕೆಲಸ ಮಾಡುತ್ತಿದ್ದವು. ಆಕ್ರೋಶ, ನಿರಾಶೆ, ನಿಸ್ಸಹಾಯಕತೆ (anger, frustration, desperation).  ಒಂದು ಕಡೆ ಮುಸ್ಲಿಂ ದೇಶಗಳಲ್ಲಿನ ಆಳುವವರ ಭ್ರಷ್ಟಾಚಾರ ಸಾಲದು ಎಂಬಂತೆ ಅಮೆರಿಕೆಯ ಮೇಲಿನ ವಿಪರೀತ ಅವಲಂಬನೆ ಮತ್ತು ಅರಬ್ಬರ ಸಂಪತ್ತನ್ನು ಲೂಟಿ ಹೊಡೆಯುತ್ತಾ ಇಸ್ರೇಲ್ ದೇಶವನ್ನು ಸಾಕುತ್ತಿದ್ದ ಅಮೆರಿಕೆಯ ಆಟ ಈತನಲ್ಲಿ ಆಕ್ರೋಶ ಹುಟ್ಟಿಸಿತ್ತು. ಸೌದಿ ದೊರೆಗಳ ವಿರುದ್ಧವೂ ಈತ ಸಮರ ಸಾರಿದ ನಂತರ ಇವನ ವಿರೋಧಿಗಳ ಪಟ್ಟಿ ದೊಡ್ಡದಾಗುತ್ತಾ ಹೋಯಿತು. ಈತನ ನೂರಾರು ಹಿಂಬಾಲಕರಲ್ಲಿ ಹಲವರನ್ನು ಕೊಂದು, ನೂರಾರು ಜನರನ್ನು ಜೈಲಿಗೆ ತಳ್ಳಿ ಅಲ್ ಕೈದಾ ಪಿಡುಗನ್ನು ಕೊನೆಗಾಣಿಸಿದ ಸೌದಿ ಸರಕಾರ ಭಯೋತ್ಪಾದನೆ ತಡೆಯುವಲ್ಲಿ ಯಾವ ಕ್ರಮ ತೆಗೆದು ಕೊಳ್ಳುವುದಕ್ಕೂ ತಾನು ಹೇಸುವುದಿಲ್ಲ ಎಂದು ವಿಶ್ವಕ್ಕೆ ತೋರಿಸಿ ಕೊಟ್ಟಿತು.   

ಯಹೂದಿಗಳ ಕೈಯ್ಯಲ್ಲೂ, ಅಮೆರಿಕೆಯ ಕೈಯ್ಯಲ್ಲೂ ಮುಸ್ಲಿಮರ ಮಾರಣ ಹೋಮ ನೋಡಿದ ಬಿನ್ ಲಾದೆನ್ ಪ್ರತಿಕ್ರಯಿಸಿದ್ದು ಹಿಂಸಾ ಮಾರ್ಗದಿಂದ. ಸುಮಾರು ೧೫೦೦ ವರ್ಷಗಳ ಚರಿತ್ರೆ ಇರುವ ಇಸ್ಲಾಂ ಧರ್ಮಕ್ಕೆ ಬಹುಶಃ ಸ್ವತಃ ಮುಸ್ಲಿಂ ಆದ ಬಿನ್ ಲಾದೆನ್ ಮಾಡಿದಷ್ಟು ಅಪಕಾರ ಬೇರಾರೂ ಮಾಡಿರಲಾರ ರೇನೋ? ತನ್ನ ಕುಕೃತ್ಯಗಳಿಂದ ಎರಡು ಯುದ್ಧಗಳಿಗೆ ಕಾರಣನಾದ, ಎರಡು ದಶಲಕ್ಷಕ್ಕೂ ಅಧಿಕ ಮುಸ್ಲಿಮರ ಸಾವಿಗೆ ಸಾಕ್ಷಿ ನಿಂತ ಬಿನ್ ಲಾದೆನ್ ಅದ್ಯಾವ ರೀತಿ ತಾನು ನಂಬಿದ ಧರ್ಮದ ಸೇವೆ ಮಾಡಿದನೋ ಅವನೇ ಬಲ್ಲ.  ವಿಶ್ವದ ಡಜನ್ ಗಟ್ಟಲೆ ಹೆಚ್ಚು ನಗರಗಳಲ್ಲಿ ಸಾವು ನೋವನ್ನು ತಂದು ನಿಲ್ಲಿಸಿದ ಬಿನ್ ಲಾದೆನ್ ಕೊನೆಗೂ ಹಿಂಸೆಯ ಮೂಲಕವೇ ತನ್ನ ಜೀವ ಕಳೆದುಕೊಂಡ. ಇಂಡೋನೇಷ್ಯಾದ “ಬಾಲಿ” ಯಿಂದ ಹಿಡಿದು ಆಫ್ರಿಕಾದ  ನೈರೋಬಿ ವರೆಗೆ ಸಾವು ನೋವಿನ ಕರಾಳ ಕಂಬಳಿಯನ್ನು ಹರಡಿದ ಬಿನ್ ಲಾದೆನ್ “ವಿನಾಕಾರಣ ಒಬ್ಬನನ್ನು ಕೊಂದರೆ ಇಡೀ ಮನುಕುಲವನ್ನು ಕೊಂದಂತೆ” ಎಂದ ಹೇಳಿದ ತನ್ನ ಭಗವಂತನ ಮುಂದೆ ನಿಂತು ಯಾವ ಸಮಜಾಯಿಷಿ ನೀಡುವನೋ?

ಬಿನ್ ಲಾದೆನ್ ನಿರ್ಗಮನದಿಂದ ನಮ್ಮೀ ವಿಶ್ವ ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಗೆ ಕಾಲಗರ್ಭದಲ್ಲಿ ಅಡಗಿದೆ  ಉತ್ತರ.

ಟ್ವಿಟ್ಟರ್ ನಲ್ಲಿ ಸಿಕ್ಕಿದ್ದು:

Kentucky Fried Chicken ಶುರು ಮಾಡಿದ “ಕರ್ನಲ್ ಸ್ಯಾಂಡರ್ಸ್” ನ ನಿಧನದೊಂದಿಗೆ KFC ಯ franchising ನಿಲ್ಲಲಿಲ್ಲ. ಅದೇ ರೀತಿ ಅಲ್ ಕೈದಾ ಸ್ಥಾಪಕನ ಸಾವಿನಿಂದ ಅಲ್ ಕೈದಾ ಸಹ ಮುಗಿಯೋದಿಲ್ಲ.  ಆದರೆ ಇದೇ ವೇಳೆ, ಅಂತರಾಷ್ಟ್ರೀಯ ಖ್ಯಾತಿಯ, ಸಂಪಾದಕ ಭಾರತೀಯ ಮೂಲದ ಫರೀದ್ ಜಕರಿಯಾ ಹೇಳಿದ್ದು, loss of a symbol can end a movement.  

ವಿ. ಸೂ: ನನ್ನ ಈ ಲೇಖನ ಬಿನ್ ಲಾದೆನ್ ನ ಅವಸಾನ ಮತ್ತು ಅವಸಾನದ ಕ್ಷಣಗಳನ್ನು ಅಮೆರಿಕೆಯ ವೃತ್ತಾಂತವನ್ನು ಆಧರಿಸಿದ್ದು. ಯಾವುದೇ independent confirmation ಯಾರಿಗೂ ಲಭ್ಯವಾಗಿಲ್ಲ.      

 

ಜಪಾನ್ ದುರಂತ ಮತ್ತು ಹಾಸ್ಯ

ಜಪಾನ್ ದುರಂತದಿಂದ ದಿಗ್ಭ್ರಾಂತವಾದ ವಿಶ್ವ ಜಪಾನೀಯರಿಗೆ ತಮ್ಮ ಅನುಭೂತಿ, ಸಂತಾಪ, ಪ್ರಾರ್ಥನೆಗಳನ್ನು ಒಂದು ಕಡೆ ಅರ್ಪಿಸುತ್ತಿದ್ದರೆ  ಮತ್ತೊಂದು ಕಡೆ ಅಲ್ಲಿನ ಸಾವು ನೋವಿನ ಬಗ್ಗೆ ಯಾವ ನೋವೂ ಇಲ್ಲದೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಕೀಳು ಅಭಿರುಚಿಯ ಜೋಕುಗಳನ್ನು ಸಿಡಿಸುತ್ತಿದ್ದಾರೆ ಕೆಲವರು.

ಅಮೆರಿಕೆಯ ಚಿತ್ರ ಸಾಹಿತ್ಯ ಲೇಖಕನೊಬ್ಬ ಜಪಾನ್ ದುರಂತದ ಬಗ್ಗೆ ಟ್ವೀಟಿಸಿದ್ದು ಹೀಗೆ; “ಜಪಾನಿನ ಭೂಕಂಪನದ ಬಗ್ಗೆ ಒಳ್ಳೆಯ ಭಾವನೆ ಬರಬೇಕಾದರೆ ಪರ್ಲ್ ಹಾರ್ಬರ್ ಸಾವಿನ ಸಂಖ್ಯೆ ಬಗ್ಗೆ ಗೂಗ್ಲಿಸಿ ನೋಡಿ”

೧೯೪೧ ರಲ್ಲಿ ಜಪಾನೀ ನಾವಿಕ ಪಡೆ ಅಮೆರಿಕೆಯ ಹವಾಯಿ ದ್ವೀಪದ ಪರ್ಲ್ ಹಾರ್ಬರ್ ಮೇಲೆ ನಡೆಸಿದ ಅಚ್ಚರಿದಾಯಕ ಆಕ್ರಮಣದಲ್ಲಿ ೨೦೦೦ ಸಾವಿರಕ್ಕೂ ಹೆಚ್ಚು ಜನ ಸತಿದ್ದರು. ಅದಕ್ಕೂ ಹೆಚ್ಚಾಗಿ ಈ ಆಕ್ರಮಣ ಅಮೆರಿಕೆಯ ಸೇನಾ ಪ್ರತಿಷ್ಠೆಗೆ ಭಾರೀ ಪೆಟ್ಟನ್ನೂ ನೀಡಿತ್ತು. ಈ ಆಕ್ರಮಣವನ್ನು ಗಮನದಲ್ಲಿಟ್ಟು ಕೊಂಡು ಪ್ರಸಕ್ತ ನೈಸರ್ಗಿಕ ವಿಕೋಪ ಕಾರಣ ಜಪಾನಿನಲ್ಲಿ ಸಂಭವಿಸಿದ ಅಗಾಧ ಸಾವು ನೋವಿಗೆ ಈತನ ಮನಸ್ಸು ಪ್ರತಿಸ್ಪಂದಿಸಲು ವಿಫಲವಾಯಿತು. ರಾಜಕೀಯ ಕಾರಣಗಳಿಗಾಗಿ ನಡೆದ ಆಕ್ರಮಣಕ್ಕೆ ಸೇಡು ಎನ್ನುವಂತೆ ಟ್ವೀಟಿಸುವ ಈತನಿಗೆ ಸಂದು ಹೋದ ಚರಿತ್ರೆ ಬಗ್ಗೆ ಮರುಗುವುದು ಹುಂಬತನ ಎನ್ನುವುದು ತಿಳಿಯದೆ ಹೋಯಿತು. ಇಂದು ಜಪಾನಿನ ಮೇಲೆ ಎರಗಿದ ನಿಸರ್ಗ ನಾಳೆ ತನ್ನ ದೇಶದ ಮೇಲೂ ಎರಗಬಾರದು ಎನ್ನುವ ಖಾತರಿ ಇಲ್ಲ ಎನ್ನ್ವುಉದು ಈ ಸಾಹಿತಿಗೆ ಅರಿಯದೆ ಹೋಯಿತು.   

ಮೇಲೆ ಹೇಳಿದ ಚಿತ್ರಸಾಹಿತಿಯ ಟ್ವೀಟ್ ಬಗ್ಗೆ ಗುಲ್ಲೆದ್ದು, ಪ್ರತಿಭಟನೆ ಬಂದಾಗ ಅವನು ಹೇಳಿದ್ದು, ನಾನು ಟ್ವೀಟಿ ಸುವಾಗ ೨೦೦ ಜನ ಮಾತ್ರ ಸತ್ತಿದ್ದರು, ಈಗ ೧೦ ಸಾವಿರಕ್ಕೆ ಮುಟ್ಟಿದೆ ಸಾವಿನ ಸಂಖ್ಯೆ, ನನ್ನ ಸಂವೇದನಾ ರಹಿತ ಕಾಮೆಂಟ್ ಗಳಿಗೆ ಕ್ಷಮೆಯಿರಲಿ”. ೨೦೦ ಜನ ಸತ್ತರೆ ಈತನಿಗೆ ದೊಡ್ಡ ವಿಷಯವಲ್ಲ. ಅದು ಗಂಭೀರವೂ ಅಲ್ಲ. ಅಮೆರಿಕೆಯ ದಿವಂಗತ ಸೆನಟರ್ ಟೆಡ್ ಕೆನಡಿಯ ಸಾಕು ನಾಯಿ “ಸ್ಪ್ಲಾಶ್” ಇತ್ತೀಚೆಗೆ ಸತ್ತಾಗ ಅದು ದೊಡ್ಡ ಸುದ್ದಿ. ಭೂಕಂಪದಲ್ಲಿ ಸತ್ತ ಜನರಿಗೆ ತಮಾಷೆಯ ಟ್ವೀಟ್. ಇದು ಸಂಸ್ಕಾರ.

ಈಗ ಮತ್ತೊಬ್ಬ ಹಾಸ್ಯನಟನ ಹಾಸ್ಯದ ಟ್ವೀಟ್ ನೋಡಿ; “ಜಪಾನೀಯರು ತುಂಬಾ ಮುಂದುವರಿದವರು, ಅವರು ಸಮುದ್ರ ತೀರಕ್ಕೆ ಹೋಗುವುದಿಲ್ಲ, ಬದಲಿಗೆ ತೀರವೇ ಅವರಿದ್ದಲ್ಲಿಗೆ ಬರುತ್ತದೆ”. ದೈತ್ಯಾಕಾರದ ಸುನಾಮಿ ಅಲೆಗಳು ೨೦೦ ರಿಂದ ೫೦೦ ಕಿಲೋ ಮೀಟರ್ ವೇಗದಲ್ಲಿ ಸೆನ್ಡಾಯ್ ನಗರದ ಮೇಲೆ ಅಪ್ಪಳಿಸಿ ಹತ್ತಾರು ಸಾವಿರ ಜನ ಸತ್ತಾಗ ಬಂದ ಶೋಕತಪ್ತ ಟ್ವೀಟ್ ಇದು. ಇದು ಬಿಳಿಯರಿಗೆ ಹಾಸ್ಯ. ಅಭಿವ್ಯಕ್ತಿ ಸ್ವಾಂತ್ರ್ಯ. ಬಿಳಿಯರಲ್ಲದ ಜನರ ಮೇಲೆ ಅವರಿಗಿರುವ ಅನುತಾಪ ಅಷ್ಟಕ್ಕಷ್ಟೇ. ಜಪಾನೀಯರನ್ನೂ, ಚೀನೀಯರನ್ನೂ ಹಳದಿ ಚರ್ಮದವರು ಎಂದು ತಮಾಷೆ ಮಾಡುತ್ತಾರಂತೆ ಪಾಶ್ಚಾತ್ಯರು.

ಆಧುನಿಕ ಬದುಕಿನ blackberry ಸಂಸ್ಕೃತಿ ಕಾರಣ ಮನುಷ್ಯ ಮತ್ತೊಬ್ಬರ ಕಷ್ಟಗಳಿಗೆ ಸ್ಪಂದಿಸಲು, ಅನುಕಂಪ ತೋರಲು ಸೋಲುತ್ತಿದ್ದಾನೆ ಎಂದರೆ ಉತ್ಪ್ರೇಕ್ಷೆ ಆಗಬಹುದೇ?       

ಭೂತ ಕಾಲದ ಬಗ್ಗೆ ತಲೆ ಕೆಡಿಸಿಕೊಳ್ಳುವವರಿಗೆ ಒಬ್ಬ ಮಹನೀಯ ಹೇಳಿದ್ದು;

the past is a foreign country; they do things differently there

ಓರ್ವ ಧೀಮಂತ ಪತ್ರಕರ್ತ

ಇಂದು ಬೆಳಿಗ್ಗೆ ನನ್ನ ಮನಸ್ಸಿನ ಮೇಲೆ ವಿವಿಧ ಭಾವನೆಗಳು ಅಲೆಗಳಂತೆ ಅಪ್ಪಳಿಸುವಂತೆ ಮಾಡಿದ ವಿಚಿತ್ರ ವರದಿಯೊಂದು ಕಣ್ಣಿಗೆ ಬಿತ್ತು. ಆಘಾತ, ದಿಗ್ಭ್ರಮೆ, ಕನಿಕರ, ಹೇಸಿಗೆ ಹೀಗೆ ನಾನಾ ಭಾವನೆಗಳನ್ನು ಒಮ್ಮೆಗೇ ಹುಟ್ಟುಹಾಕಿದ ಒಂದು ವರದಿ;   ಒಬ್ಬ ಪತ್ರಕರ್ತ ತನ್ನ ಮನಃಪರಿವರ್ತನೆಯಾದ ಕಾರಣ ಪತ್ರಕರ್ತನ ಕಸುಬಿಗೆ “ಬೈ ಬೈ” ಹೇಳಿದ್ದು. ಇಂಗ್ಲೆಂಡಿನ ಟ್ಯಾಬ್ಲಾಯ್ಡ್ daily star ಪತ್ರಿಕೆಯಲ್ಲಿ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದ “ರಿಚರ್ಡ್ ಪೆಪ್ಪಿಯಾಟ್” ಪತ್ರಿಕೆಯ ಧಣಿಗೆ ಬರೆದ ಬಹಿರಂಗ ಪತ್ರ ಪತ್ರಿಕಾ ವಲಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ, ಹಾಗೆಯೇ ತಮ್ಮ ರಹಸ್ಯ ಅಜೆಂಡಾ ಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಸುದ್ದಿ ಮಾಧ್ಯಮಗಳು ಎಂಥ ನೀಚ ಕೃತ್ಯಕ್ಕೂ ಇಳಿಯಲು ಸಿದ್ಧ ಎನ್ನುವುದನ್ನು ಸ್ಥಿರೀಕರಿಸಿದೆ.      

ರಿಚರ್ಡ್ ಪೆಪ್ಪಿ ಯಾಟ್ ರಾಜೀನಾಮೆ ನೀಡಲು ಕಾರಣವಾದ ವರದಿಗಳನ್ನ ನೋಡಿ.

ಇಂಗ್ಲಿಷ್ ಡಿಫೆನ್ಸ್ ಲೀಗ್ (EDL) ಎನ್ನುವ ಸಂಘಟನೆ ಇಂಗ್ಲೆಂಡಿಗೆ ವಲಸೆ ಬರುವವರ ವಿರುದ್ಧ ಹೋರಾಡುತ್ತದೆ. ಬಿಳಿಯರ ಹಕ್ಕುಗಳು ಮಾಯವಾಗುತ್ತಿವೆ ಎಂದು ಪುಕಾರು ಹಬ್ಬಿಸುತ್ತದೆ. ಇದೊಂದು ಮುಸ್ಲಿಂ ವಿರೋಧಿ, ಬಲಪಂಥೀಯ ಸಂಘಟನೆ. ಈ ಸಂಘಟನೆಗೆ ರಾಜಕೀಯ ಪಸ್ಖವಾಗುವ ಇರಾದೆ ಇಲ್ಲ. daily star ನ ಪತ್ರಕರ್ತ edl ನಾಯಕನೊಬ್ಬನ ಸಂದರ್ಶನ ದಲ್ಲಿ ರಾಜಕೀಯ ಸೇರುವ ಬಗ್ಗೆ ಕೇಳಿದಾಗ ನಾಯಕ ಅಂಥ ಉದ್ದೇಶ ಸದ್ಯಕ್ಕಿಲ್ಲ ಎನ್ನುತ್ತಾನೆ. ಆದರೆ ಪತ್ರಿಕೆ ವರದಿ ಮಾಡಿದ್ದು edl ರಾಜಕೀಯ ಸೇರಲಿದೆ ಎಂದು. ಈ ಸುದ್ದಿ ಮುಖಪುಟದಲ್ಲಿ ರಾರಾಜಿಸಿದಾಗ ಭಯಗ್ರಸ್ಥನಾದ ಪತ್ರಿಕೆ ಮಾರುವ ಮುಸ್ಲಿಂ ವ್ಯಕ್ತಿಯ ಮುಖದ ಮೇಲಿನ ದುಗುಡ ನೋಡಿ ರಿಚರ್ಡ್ ಕೆಲಸಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸುತ್ತಾನೆ.

daily star ಪತ್ರಿಕೆ ತನ್ನ ವರದಿಗಾರಿಗೆ ಕೊಡುವ brief ಏನೆಂದರೆ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುವ (islamophobia) ಲೇಖನಗಳನ್ನು ಸೃಷ್ಟಿಸಿ ಕೊಡಬೇಕು. ಈ ಕೆಲಸಕ್ಕೆ ಪತ್ರಕರ್ತರ ಮನಃಸ್ಸಾಕ್ಷಿ ಒಪ್ಪದೇ ಇದ್ದ ಪಕ್ಷದಲ್ಲಿ ನೀನಲ್ಲದಿದ್ದರೆ ಮತ್ತೊಬ್ಬ ಎನ್ನುವ ಧೋರಣೆ ಆ ಪತ್ರಿಕೆಯದು. ಕೆಲಸದಿಂದ ವಜಾ ಆಗುವ ಭಯ ದಿಂದ ಪತ್ರಕರ್ತರು ಪತ್ರಿಕೆಯ ವಿರುದ್ಧ ಹೋಗಲು ತಯಾರಿಲ್ಲ. 

ಮುಸ್ಲಿಮರಿಗಾಗಿ ಮಾತ್ರ ಇರುವ ಶೌಚಗಳನ್ನು ನಮ್ಮ ತೆರಿಗೆ ಹಣದ ಖರ್ಚಿನಲ್ಲಿ ಕಟ್ಟಲಾಗುತ್ತಿದೆ ಎನ್ನುವ ಸುಳ್ಳು ವರದಿಯನ್ನು ತಾನು ಸೃಷ್ಟಿಸಿದೆ ಎನ್ನುವ ಈತನ ಮಾತನ್ನು ಕೇಳುವಾಗ ನಮ್ಮ ವರದಿಗಾರರು ಗಿಳಿ ಪಾಠದಂತೆ ಯಾವಾಗಲೂ ಪುನರಾವರ್ತಿಸುವ ಮುಸ್ಲಿಮರಿಗೆ ಮೀಸಲಾತಿ ಎನ್ನುವ ವರದಿಗಳು ಕಣ್ಣ ಮುಂದೆ ಬರುತ್ತವೆ. ಮುಸ್ಲಿಮರಿಗೆ ಮಾತ್ರವಲ್ಲ ಮೀಸಲಾತಿ, ಪರಿಶಿಷ್ಟ ಪಂಗಡ, ಬುಡಕಟ್ಟು, ಹಿಂದುಳಿದ ಜಾತಿ ಮುಂತಾದ  ಹಲವು ಸಾಮಾಜಿಕ ಗುಂಪುಗಳಿಗೂ ಇವೆ ರಿಯಾಯಿತಿ ಮತ್ತು ಮೀಸಲಾತಿ ಎನ್ನವುದು ಇವರಿಗೆ ತಿಳಿದಿದ್ದರೂ ತಿಳಿಯುವುದಿಲ್ಲ.

ಪ್ರತೀ ನಿತ್ಯವೂ ಇಸ್ಲಾಂ ಧರ್ಮೀಯರನ್ನು ಗುರಿಯಾಗಿಸಿ “ ಅವರು, ಮತ್ತ ನಾವು (us and them) “ ಎನ್ನುವ ಭಾವನೆ ಹುಟ್ಟಿಸುವ ಲೇಖನ ಬರೆಯಲೇಬೇಕು. ಒಪ್ಪದೇ ಇದ್ದರೆ ನನ್ನ ಕೆಲಸ ಹೋಗಬಹುದೋ ಎಂದು ಮಾಡುತ್ತಿದ್ದೆ. ನನ್ನ ಫೋನಿನ speed dial ನಲ್ಲಿ ಒಬ್ಬ ಮೌಲ್ವಿಯ ನಂಬರ್ ಇಟ್ಟುಕೊಂಡಿದ್ದೇನೆ. ಬೆಳಗಾದ ಕೂಡಲೇ ಈ ತಲೆ ಕೆಟ್ಟ ಮೌಲ್ವಿ ಗೆ ಫೋನಾಯಿಸಿ ಸಲಿಂಗ ಕಾಮಿಗಳಿಗೆ ಮತ್ತು ಕುಡುಕರಿಗೆ ಕಲ್ಲು ಹೊಡೆಯುವ ಶಿಕ್ಷೆ ಇದೆಯೇ ಎಂದು ಕೆಣಕಿದ ನಂತರ ಆ ಮೌಲ್ವಿ ಕೆರಳಿ ಫತ್ವ ನೀಡುವ ರೀತಿಯಲ್ಲಿ ಹೇಳುವುದನ್ನು ಭಕ್ತಿಯಿಂದ ವರದಿ ಮಾಡುತ್ತಿದ್ದೆ. 

ಓರ್ವ ನಟಿ ತಾನು ಹೊರಹೋಗುವಾಗ ಮಾಡಿಕೊಳ್ಳುವ ಸಿದ್ಧತೆ ಗೆ ತೆಗೆದುಕೊಳ್ಳುವ ಸಮಯವನ್ನೂ ಕಡಿಮೆ ಮಾಡಲು “ಸಂಮೋಹನ” (hypno therapy) ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು  ಹುಟ್ಟಿಸಿ ಕೊಂಡು ಬರೆದಿದ್ದ ಈ ಪತ್ರಕರ್ತ ಹೇಳುತ್ತಾನೆ, “ಈ ಸಂಮೋಹನ ದ ಬಗ್ಗೆ ನನಗೆ ಹೇಗೆ ತಿಳಿಯಿತು? ಸಂಜೆ ಆರರ ಸಮಯ ಖಾಲಿ ಹಾಳೆ ನೋಡುತ್ತಾ ಮಗ್ನನಾಗಿದ್ದಾಗ ನನ್ನ ಕುಂಡೆ ಯೊಳಗಿಂದ ಎಳೆದು ತಂದೆ ಈ ಕಲ್ಪನೆಯನ್ನು ಎಂದು ಹೇಳುತ್ತಾನೆ. ಆದರೆ ಈ ಕಲ್ಪನಾ ಬರಹ ನನಗೆ ೧೫೦.೦೦ ಪೌಂಡ್ ಗಳ ಧನವನ್ನೂ ಒದಗಿಸಿತು ಎಂದು ಹೇಳುತ್ತಾನೆ.

ರಿಚರ್ಡ್ ಹೇಳುತ್ತಾನೆ, ನನಗೆ ಗೊತ್ತು ಡೈಲಿ ಮೇಲ್ ಪತ್ರಿಕೆ (ನೈತಿಕತೆ ಇಲ್ಲದ) ಕುರೂಪಿಗಳ ಹಿಂಡಿನಲ್ಲಿ ಎದ್ದು ಕಾಣುವ ಮತ್ತೊಂದು ಕುರೂಪಿ ಪತ್ರಿಕೆ ಎಂದು.

ಇಂಥ ಸುಳ್ಳು ವರದಿಗಳನ್ನು ಸೃಷ್ಟಿಸುವವನು ಬರೀ ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು schizophrenic (ಭ್ರಮಾ ಲೋಕದಲ್ಲಿರುವವ) ಎಂದು ಆಸ್ಪತ್ರೆಗೆ ಅಟ್ಟಬಹುದಿತ್ತು, ಆದರೆ ಈ ಕೆಲಸವನ್ನ ಪತ್ರಿಕೆ ಮಾಡಿದಾಗ ಅದೆಲ್ಲ ಓಕೆ ಎನಿಸಿಕೊಳ್ಳುತ್ತದೆ ಎಂದು ರಿಚರ್ಡ್ ನ ಅಭಿಪ್ರಾಯ. ಪತ್ರಕರ್ತ ರಿಚರ್ಡ್ ನಿಗೆ ಅವನ ಜೀವನದ ಯಾವುದಾದರೂ ಒಂದು ಸನ್ನಿವೇಶದಲ್ಲಿ ಸಿಕ್ಕಿರಬಹುದಾದ ನೈತಿಕ ಶಿಕ್ಷಣ ತನ್ನ ಲೇಖನಿಯನ್ನು ಮಾರಿಕೊಳ್ಳುವ ಕಸುಬಿಗೆ ಎಡಗಾಲಿನಲ್ಲಿ ಒದ್ದು ಹೊರಬರಲು ಪ್ರೇರಣೆ ನೀಡಿತು.  ತಡವಾಗಿಯಾದರೂ ಬಂದ ಈ ಉನ್ನತ ಮಟ್ಟದ ನೈತಿಕತೆ ಬೇರೆ ಪತ್ರಕರ್ತರುಗಳಲ್ಲೂ ಬರಬಹುದೇ? ಆ ಸುದಿನಕ್ಕಾಗಿ ನಾವು ಕಾಯಬಹುದೇ?     

ನನಗೂ ಆಗಾಗ ಅನ್ನಿಸಿದ್ದಿದೆ. ಈ ರೀತಿ ಒಂದು ಧರ್ಮೀಯರ ಮೇಲೆ ಕಪೋಲ ಕಲ್ಪಿತ ವರದಿಗಳನ್ನು, ಊಹಾಪೋಹಗಳನ್ನು ಸೃಷ್ಟಿಸುತ್ತಾ ಸಮಾಜದಲ್ಲಿ ಗಲಭೆ, ಕ್ಷೋಭೆಗೆ ಕಾರಣವಾಗುವ ಲೇಖನಿ ಹಿಡಿದ ಈ so called journalist ಗಳಿಗೆ ಭಗವಂತನು ಆತ್ಮವೊಂದನ್ನು ಫಿಟ್ ಮಾಡಿದ್ದಿದ್ದರೆ ಅವರು ತಮ್ಮ ಕಸುಬಿಗೆ ಎಂದೋ ವಿದಾಯ ಹೇಳುತ್ತಿದ್ದರು ಎಂದು. ತಮ್ಮ ವರದಿ ಕಾರಣ ಜನರ ಸಂಶಯ ಗುಮಾನಿಗೆ ಒಳಪಟ್ಟು, ದಬ್ಬಾಳಿಕೆಗೆ ಶೋಷಣೆಗೆ ಗುರಿಯಾಗುವ ಅಮಾಯಕನನ್ನು ನೋಡಿದಾಗ ಅವರಿಗೆ ಏನೂ ಅನ್ನಿಸುವುದಿಲ್ಲವೇ? ಜೇಬು ಭರ್ತಿಯಾಗುತ್ತಿದ್ದಂತೆ ಬುದ್ಧಿ ದಿವಾಳಿತನದ ದಾರಿ ಹಿಡಿದ್ದು ಬಹುಶಃ ಅವರುಗಳಿಗೆ ಕಾಣುವುದಿಲ್ಲವೇನೋ.  

ಪತ್ರಿಕೆಗಳಲ್ಲ್ಲಿ ಯಾವುದಾದರೂ ಉತ್ಪನ್ನಗಳ ಬಗ್ಗೆ ಲೇಖನ ಬಂದರೂ ಆ ಲೇಖನದ ಹಿಂದೆ ಹಣದ ವಾಸನೆ ಬಡಿದೇ ತೀರುತ್ತದೆ. ವಿಮರ್ಶೆ ಮಾಡುವ ನೆಪದಲ್ಲಿ ಉತ್ಪಾದನೆಗಳ ಬಿಕರಿಗೆ ಕಂಪೆನಿಗಳಿಗೆ ಸಹಾಯ ಒದಗಿಸುವ ಪತ್ರಕರ್ತರಿದ್ದಾರೆಂದು ಕೇಳಿದ್ದೇನೆ. ವೈಯಕ್ತಿಕ ನಿಂದನೆ ಮತ್ತು ತೇಜೋವಧೆಯಂಥ  ಕೆಲಸವಂತೂ ಎಷ್ಟು ಸೊಗಸಾಗಿ ಮಾಡುತ್ತವೆ ಪತ್ರಿಕೆಗಳು ಎಂದು ಬೇರೆ ಹೇಳಬೇಕಿಲ್ಲ.  

ದಿನ ನಿತ್ಯದ ಆಗುಹೋಗುಗಳ ಬಗ್ಗೆ ನಿಗಾ ಇಟ್ಟುಕೊಂಡು ಕುತೂಹಲದಿಂದ ನಿರಂತರವಾಗಿ ಸುದ್ದಿಗಳೊಂದಿಗೆ ನಂಟು ಬಯಸುವ ಓದುಗ ಕೇವಲ ಸುದ್ದಿ ಮಾತ್ರವನ್ನಲ್ಲ ಅದರೊಂದಿಗೆ ಬರುವ ಹಲವು ವಿಚಾರಗಳನ್ನೂ ಅರಿಯುತ್ತಾ ಸಾಗುತ್ತಾನೆ. ಹಾಗಾಗಿ ಮಾಧ್ಯಮ ಎನ್ನವುದು ಒಂದು ರೀತಿಯ ಮುಕ್ತ ವಿಶ್ವ ವಿದ್ಯಾಲಯ. ಆದರೆ ಈ ಪವಿತ್ರ ಕಸುಬನ್ನು ಲಾಭ ಗಳಿಸುವ ಉದ್ದಿಮೆಯಾಗಿ ಮತ್ತು ತಮ್ಮ ರಾಜಕೀಯ ಚಿಂತನೆಗಳನ್ನು ಪ್ರಚುರಪಡಿಸಲು propaganda machinery ಆಗಿ ಉಪಯೋಗಿಸಿಕೊಂಡಾಗ ಆಗುವ ಅನಾಹುತವೇ ನಾವು ಇಂದು ಕಾಣುತ್ತಿರುವ ವೈಮನಸ್ಸು, ಸಂಶಯ ಮತ್ತು ಇವೆರೆಡರ ಕಾರಣ ನಡೆಯುವ ಗಲಭೆ, ಹಿಂಸೆ.

ನಾವು ಹಣ ಕೊಟ್ಟು ಕೊಳ್ಳುವ ವಸ್ತುಗಳ ಬಗ್ಗೆ ನಿಗಾ ಇಡುತ್ತೇವೆ. ವಸ್ತುವಿನ ಗುಣಮಟ್ಟ, ತಯಾರಾದ ತಾರೀಖು, ಕಂಪೆನಿ, ಅದರಲ್ಲಿರಬಹುದಾದ ingredients, ತಯಾರಿಸಿದ ಕಂಪೆನಿಯು ISO, HACCP ಮುಂತಾದ certification  ಗಳನ್ನು ಹೊಂದಿದೆಯೇ ಇತ್ಯಾದಿ. ಆದರೆ ನಾವು ಕೊಳ್ಳುವ ಪತ್ರಿಕೆಗಳ ಗುಣಮಟ್ಟದ ಬಗ್ಗೆ ನಾವೆಂದಾದರೂ ಯೋಚಿಸಿದ್ದೇವೆಯೇ?ಅದರಲ್ಲಿ ಬರುವ ಕಂಟೆಂಟ್ ಗಳ ಬಗ್ಗೆಯಾಗಲೀ, ಅದರಲ್ಲಿ ಬರುವ ವಿಷಯಗಳು, ಮತ್ತು ಆ ವಿಷಯಗಳ ಹಿಂದಿನ ಕರ್ತೃಗಳ ನಾವೇಕೆ ಅಸಡ್ಡೆ ತೋರಿಸುತ್ತೇವೆ? ಬೇರೆಲ್ಲಾ PRODUCT ಗಳಿಗೆ ಇರುವಂತೆ  ಪತ್ರಿಕೆಗಳಿಗೂ ಯಾಕೆ ಒಂದು CERTIFICATION ಇರಕೂಡದು? ಪ್ರಾಥಮಿಕ ಶಾಲೆಯ ಬಾಗಿಲನ್ನೂ ಕಾಣದವನೂ ಪತ್ರಕರ್ತನಾಗಿ ತನಗೆ ತೋಚಿದ ರೀತಿಯಲ್ಲಿ ವರದಿಗಳನ್ನು, ಜನರಿಗೆ ಬಡಿಸಿದರೆ ಅದರ ಪರಿಣಾಮ ಸಮಾಜದ ಮೇಲೆ ಹೇಗಾಗಬಹುದು?  journalistic standard, ethics ಮತ್ತು ಪತ್ರಿಕೋದ್ಯಮದ ಗುಣಶ್ರೇಷ್ಠತೆ (merit) ಇವುಗಳ ಅವಶ್ಯಕತೆ ಇಲ್ಲವೇ ಪ್ರಜಾಪ್ರಭುತ್ವದ ನಾಲ್ಕನೇ ವ್ಯವಸ್ಥೆ (fourth estate) ಎಂದು ಕರೆಯಲ್ಪಡುವ ಪತ್ರಿಕೋದ್ಯಮಕ್ಕೆ? ಅಥವಾ ಹಣ ಮತ್ತು ಅಜೆಂಡಾದ ಹಿಂದೆ ಬಿದ್ದು “ಫಿಫ್ತ್ ಕಾಲಂ” ಆಗಿ ಕುಸಿದು ಬಿಟ್ಟಿತೆ ಪತ್ರಿಕೋದ್ಯಮ?

ಕೊನೆಯದಾಗಿ ತನ್ನ ಧಣಿಗೆ ರಿಚರ್ಡ್ ಹೀಗೆ ಹೇಳುತ್ತಾನೆ. “ನಿನ್ನ ಪತ್ರಿಕೆಯವರು ಹೆಣೆಯುವ ಪದಗಳು, ವಿಷಯಗಳು ಜನರ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತವೆ ಎನ್ನುವ ಜ್ಞಾನ ನಿನಗಿಲ್ಲದಿದ್ದರೆ ಒಂದು ಕಾಮ ಪ್ರಚೋದಕ (porn) ಪತ್ರಿಕೆಯನ್ನು ಶುರು ಮಾಡು. ಅಥವಾ ಅವರು ಬರೆದ ಲೇಖನಗಳು ಪರಿಣಾಮ ಬೀರುತ್ತವೆ ಎಂದು ನಿನಗನ್ನಿಸಿಯೂ ಸಹ ನಿನ್ನ ಸಂಪಾದಕರು ಅನುಮತಿಸುವ ಪ್ರಚೋದಕ ಲೇಖನಗಳನ್ನು ತಡೆಯುವ ಮನಸ್ಸು ನಿನಗೆ ಇಲ್ಲದಿದ್ದರೆ ಬ್ರಿಟನ್ ನಂಥ ಒಂದು ಮಹೋನ್ನತ ದೇಶಕ್ಕೆ ನೀನೊಬ್ಬ ಕಂಟಕಪ್ರಾಯ ಎಂದು ತಿಳಿದುಕೋ”.

ಹತಾಶೆಯ ಮತ್ತು ಕ್ರೋಧ ತುಂಬಿದ ಮೇಲಿನ ಮಾತುಗಳು daily star ನ ಧಣಿಗೆ ಮಾತ್ರ ಅನ್ವಯವಾಗದೇ ಲೇಖನಿಯ ಪಾವಿತ್ರ್ಯದ ಅರಿವಿಲ್ಲದ ಎಲ್ಲರಿಗೂ ಅನ್ವಯವಾಗುತ್ತದೆ.         

fifth column: A fifth column is a group of people who clandestinely undermine a larger group such as a nation from within.

ಸಂಪೂರ್ಣ ಲೇಖನಕ್ಕೆ ಈ ಕೊಂಡಿ ಕ್ಲಿಕ್ಕಿಸಿ.

http://www.guardian.co.uk/media/2011/mar/04/daily-star-reporter-letter-full

ನೀವೂ ಸ್ವಲ್ಪ ನಕ್ಕು ಹಗುರವಾಗಿ

 

ಲಿಬ್ಯಾದ ಅಧ್ಯಕ್ಷ ಮುಅಮ್ಮರ್ ಗದ್ದಾಫಿ ವಿರುದ್ಧ ಜನಾಂದೋಲನ ದಿನಗಳೆದಂತೆ ವಿಕೋಪಕ್ಕೆ ಹೋಗುತ್ತಿದೆ. ಜನ ಸಾಯುತ್ತಿದ್ದಾರೆ, ಗದ್ದಾಫಿ ತನ್ನ ಹಿಂದಿನ ಪೊಗರು ಬಿಡದೆ ಲಿಬಿಯನ್ನರನ್ನು ಇಲಿ, ಜಿರಲೆಗಳಿಗೆ ಹೋಲಿಸಿ ಅವರನ್ನು (ಅವುಗಳನ್ನ) ನಿರ್ನಾಮ ಮಾಡುತ್ತೇನೆ, ಇಡೀ ದೇಶವನ್ನೇ ಸುಟ್ಟು ಹಾಕುತ್ತೇನೆ ಎಂದು ಬೆದರಿಕೆ ನೀಡುತ್ತಿದ್ದಾನೆ. ಈ ಬೆದರಿಕೆ ನೀಡುವಾಗ ತಾನೂ ಅದೇ ದೇಶದಲ್ಲೇ ಹುಟ್ಟಿದವ ಎನ್ನುವ ಸಾಮಾನ್ಯ ಪ್ರಜ್ಞೆಯೂ ಅವನಿಂದ ವಿದಾಯ ಪಡೆದು ಕೊಂಡಿದೆ.

೧೯೬೯ ರ ಕ್ರಾಂತಿಯಲ್ಲಿ ಅಧಿಕಾರದ ಗದ್ದುಗೆಗೆ ಏರಿದ ಕೇವಲ ೨೭ ರ ಪ್ರಾಯದ ಸೇನಾ ಕ್ಯಾಪ್ಟನ್ ಗದ್ದಾಫಿಗೂ, ಇಂದಿನ ಗದ್ದಾಫಿಗೂ ಅಜಗಜಾಂತರ ವ್ಯತ್ಯಾಸ. ಸರ್ವಾಧಿಕಾರಿಗಳೇ ಹೀಗೆ ಏನೋ? ತಾವು ಹಿಡಿದ ಅಧಿಕಾರ ಸ್ವಲ್ಪ ಹೆಚ್ಚು ಕಾಲ ನಿಂತರೂ ಮದ್ಯದ ಬಟ್ಟಲನ್ನು ಬಿಡದ ಮದ್ಯ ವ್ಯಸನಿಯಂತೆ ಆಡಲು ತೊಡಗುತ್ತಾರೆ. ಅಧಿಕಾರದ ಅಮಲಿಗೂ, ಮಧ್ಯದ ಅಮಲಿಗೂ ದೊಡ್ಡ ವ್ಯತ್ಯಾಸವೇನೂ ಕಾಣದು. ೧೯೭೭ ರ ತುರ್ತು ಪರಿಸ್ಥಿತಿ ವೇಳೆಯ ಇಂದಿರಾ ಗಾಂಧೀ ಮತ್ತು ಆಕೆಯ ಮಗ ಸಂಜಯ್ ಗಾಂಧೀಯವರುಗಳ ಸರ್ವಾಧಿಕಾರ ಮಾತ್ರ ನಮಗೆ ಗೊತ್ತು. ಚರಿತ್ರೆಯ ಆ ಒಂದು ಕಹಿ ಪಾಠ ಒಂದು ನೆನಪು ಮಾತ್ರ.

ಸರ್ವಾಧಿಕಾರಿಗಳ ಕೈಗೆ ಸರ್ವ ಅಧಿಕಾರಗಳೂ ಪ್ರಾಪ್ತವಾದಾಗ ಇಂದ್ರಿಯಗಳು ಕಾಲಿಗೆ ಬುದ್ಧಿ ಹೇಳುತ್ತವೆ. ವಿಶೇಷವಾಗಿ ಕಿವುಡುತನ ಆವರಿಸಿ ಕೊಳ್ಳುತ್ತದೆ. ಜನರ ನಾಡಿಮಿತ ಕೇಳುವುದಿಲ್ಲ. ತುನೀಸಿಯಾದ, ಈಜಿಪ್ಟ್ನ ಅಧ್ಯಕ್ಷರುಗಳಿಗೆ ಆಗಿದ್ದು ಇದೇ. ದೀರ್ಘಕಾಲ ಆಡಳಿತ ನಡೆಸುತ್ತಾ ತಮಗೆ ಬೇಕಾದ ಹೊಗಳು ಭಟ್ಟರನ್ನು ತಮ್ಮ ಸುತ್ತಾ ಹೆಣೆದು ಕೊಂಡು ರಾಜ್ಯದ ಜನರನ್ನು ಮರೆತರು. ಒಂದು ಸುದಿನ ಜನರ ಬಂಡಾಯಕ್ಕೆ ಬೆಲೆ ತೆತ್ತರು.

ಸರ್ವಾಧಿಕಾರಿಗಳು delusional ಆಗಿ ಬಿಡುತ್ತಾರಂತೆ ಸುದೀರ್ಘ ಕುರ್ಚಿ ವಾಸದ ಕಾರಣ. ಈ delusion ಬಗ್ಗೆ ಒಂದು ಸುಂದರ ಕಾರ್ಟೂನ್ ಕಾಣಲು ಸಿಕ್ಕಿತು ವೆಬ್ ತಾಣವೊಂದರಲ್ಲಿ. ಈ ಕಾರ್ಟೂನ್ ನೋಡಿ ಹೊಟ್ಟೆ ಹುಣ್ಣಾಗುವಂತೆ ನಕ್ಕೆ ನಾನು. ನಿಮಗೂ ಆ ಅನುಭವ ಆಗಲೇ ಬೇಕಿಂದಿಲ್ಲ ಆದರೆ ತುಟಿಯಂಚಿನಲ್ಲಿ ಮುಗುಳ್ನಗು ವನ್ನಾದರೂ elicit ಮಾಡಿಯೇ ತೀರುತ್ತದೆ ಈ ವ್ಯಂಗ್ಯ ಚಿತ್ರ. ಆಸ್ವಾದಿಸಿ.

ನಾಸ್ತಿಕನ ಬಾಯಲ್ಲಿ ದೇವರು

 

೮೦ ನೆ ಜನ್ಮ ದಿನವನ್ನು ಆಚರಿಸುತ್ತಿರುವ ಮಿಖಾಯಿಲ್ ಗೋರ್ಬಚೋಫ್ ಸೋವಿಎಟ್ ಒಕ್ಕೊಟವನ್ನು ಛಿದ್ರಗೊಳಿಸಿದ ಕೀರ್ತಿಗೆ ಭಾಜನರು. ಒಕ್ಕೂಟ ಮುರಿದು ಬೀಳುವವರೆಗೆ ಅಮೆರಿಕೆಗೆ ಕಮ್ಯುನಿಸ್ಟ್ ರಷ್ಯಾ ಎಂದರೆ ಒಂದು ರೀತಿಯ ನಡುಕ, ಭಯ. ೮೦ ರ ದಶಕದಲ್ಲಿ ಬಿರುಸಾಗಿ ನಡೆದ ಅಂತಾ ರಾಷ್ಟ್ರೀಯ ವಿದ್ಯಮಾನದಲ್ಲಿ ಅಮೇರಿಕಾ ಬರ್ಲಿನ್ ಗೋಡೆಗೂ ಒಂದು ಗತಿ ಕಾಣಿಸಿ ಸೋವಿಎಟ್ ಮೂರಾಬಟ್ಟೆ ಆಗಿಸುವಲ್ಲಿ ಯಶಸ್ಸನ್ನು ಕಂಡಿತು. ಈ ಯಶಸ್ಸಿಗೆ ಅಮೆರಿಕೆಯ ಕಪಟತನ ಕ್ಕಿಂತ ಒಂಚೂರು ಗೋರ್ಬಚೋಫ್ ಮತ್ತೊಂಚೂರು ಸಾಕ್ಷಾತ್ ಪರಮಾತ್ಮನೇ ಕಾರಣೀಕರ್ತರಾದರು. ದೇವರು ಯಾಕೆ ಬಂದ ಇಲ್ಲಿ ಎನ್ನುತ್ತೀರೋ? ಅಲ್ಲ, ಈ ವಿಶ್ವವನ್ನು, ಅಗಾಧ ಆಗಸವನ್ನು, ಗ್ರಹ, ಧೂಮಕೇತಾದಿಗಳನ್ನು, ನಂತರ ಇವುಗಳೆಲ್ಲವಕ್ಕೆ viceroy ಆಗಿ ಮನುಷ್ಯನನ್ನು ಸೃಷ್ಟಿಸಿ ಭೂಲೋಕಕ್ಕೆ ಕಳಿಸಿದ ತಪ್ಪಿಗೆ ರಷ್ಯಾದವರು ದೇವ ಸ್ಮರಣೆಯೇ ಬೇಡ ಎಂದರೆ  ಅವನಾದರೂ ಏಕೆ ಸುಮ್ಮನಿರಬೇಕು? ಗೋರ್ಬಚೋಫ್ ನನ್ನು ದಾಳವಾಗಿ ಉಪಯೋಗಿಸಿ ವಿಶ್ವದ ಮಹಾ ಶಕ್ತಿ ರಶ್ಯಾವನ್ನು ಬೀದಿಗೆ ತಂದು ನಿಲ್ಲಿಸಿಬಿಟ್ಟ ದೇವರು ಈಗಲಾದರೂ ನನ್ನ ಜಪ ಮಾಡುತ್ತಾ ಬಿದ್ದಿರಿ ಎಂದು.

ಆಫ್ಘಾನಿಸ್ತಾನದ ಯುದ್ಧದಲ್ಲಿ ತಲ್ಲೀನವಾದ ಅಮೆರಿಕೆಗೆ ಚಾರಿತ್ರಿಕ ಮತ್ತು ರಾಜತಾಂತ್ರಿಕ ತಿರುಗೇಟಾಗಿ ಪರಿಣಮಿಸಿದೆ ಆಫ್ಘನ್ ಯುದ್ಧ ಎಂದು ಗೋರ್ಬಚೋಫ್ ವಾದ. ಆಫ್ಘಾನಿಸ್ತಾನದಲ್ಲಿ ರಷ್ಯಾ ಬೆಂಬಲಿತ ಸರಕಾರವನ್ನು ಉರುಳಿಸಲು ಮುಜಾಹಿದೀನ್ಗಳನ್ನು ಹರಿಬಿಟ್ಟ ಅಮೆರಿಕೆಗೆ ಈಗ ಅದೇ ಮುಜಾಹಿದೀನ್ ಗಳೇ ಸವಾಲಾಗಿ ಪರಿಣಮಿಸಿರುವುದು ಒಂದು ರೀತಿಯ ಕಾಕತಾಳೀಯ ಬೆಳವಣಿಗೆ.” ನನ್ನ ಪ್ರಕಾರ ದೇವರು ತಪ್ಪು ಮಾಡುವವರನ್ನು ಶಿಕ್ಷಿಸಲು ತನ್ನದೇ ಆದ mechanism ಅನ್ನು ಬಳಸುತ್ತಾನೆ ಎಂದು ಗೋರ್ಬಚೋಫ್ ನುಡಿಯುತ್ತಾರೆ. ಕಮ್ಯುನಿಸ್ಟರೆಂದರೆ ನಮ್ಮ ಪ್ರಕಾರ ನಿರೀಶ್ವರವಾದಿಗಳು, ಗೋರ್ಬಚೋಫ್ ಒಬ್ಬ ಕಮ್ಯುನಿಸ್ಟ್. ಇವರ ಬಾಯಲ್ಲಿ ದೇವರ ಪ್ರಸ್ತಾಪವೇ? ಅಥವಾ ನಿರೀಶ್ವರವಾದಿಯಾಗಿದ್ದ ಗೋರ್ಬಚೋಫ್ ರ ಕೊರಳಿಗೆ ಅವರ ಮಿತ್ರ ಅಮೆರಿಕೆಯ ಅಧ್ಯಕ್ಷ ರೊನಾಲ್ಡ್ ರೇಗನ್ ಶಿಲುಬೆ ಕಟ್ಟಿಬಿಟ್ಟರೆ? ಏನೇ ಆದರೂ ಆಫ್ಘಾನಿಸ್ತಾನ ಮಾತ್ರ ಅಮೆರಿಕೆ ಮಟ್ಟಿಗೆ ನೀನೆ ಸಾಕಿದಾ ಗಿಳಿ, ನಿನ್ನಾ ಮುದ್ದಿನ ಗಿಳೀ, ಹದ್ದಾಗಿ ಕುಕ್ಕಿತಲ್ಲೋ….. ಆಗಿದ್ದಂತೂ ಗುನುಗಿಸಲೇಬೇಕಾದ ಬೇಕಾದ ಸತ್ಯವೇ.

ಚಿತ್ರ ಸೌಜನ್ಯ: independent ಪತ್ರಿಕೆ (UK)

ಈಗ ಲಿಬ್ಯಾದ ಸರತಿ

೭೦ ರ ದಶಕದ ಭಯಾನಕ ವೆಸ್ಟ್ ಇಂಡೀಸ್ ಬೌಲರುಗಳ ಮಾರಕ ಬೌಲಿಂಗ್ ಗೆ ತರಗೆಲೆಗಳಂತೆ ಉದುರುತ್ತಿದ್ದ ಅತಿರಥ ಮಹಾರಥ ದಾಂಡಿಗರಂತೆ ಜನಕ್ರಾಂತಿಯ ಬಿರುಗಾಳಿಗೆ ತತ್ತರಿಸುತ್ತಿದ್ದಾರೆ ಮಧ್ಯಪ್ರಾಚ್ಯದ ನಿರಂಕುಶಾಧಿಕಾರಿಗಳು. ಕ್ರಾಂತಿ ಆರಂಭವಾದ ಪುಟ್ಟ ಅರಬ್ ರಾಷ್ಟ್ರ ಟುನೀಸಿಯಾದ ಅಧ್ಯಕ್ಷ ೨೧ ವರ್ಷಗಳ ಅಧಿಕಾರದ ನಂತರ ತನ್ನ ವಿಕೆಟ್ ಒಪ್ಪಿಸಿದರೆ ಅಲ್ಲೇ ಹತ್ತಿರದ ಈಜಿಪ್ಟ್ ನ ಅಧ್ಯಕ್ಷ ೨೯ ವರ್ಷಗಳ ದೀರ್ಘ ಬ್ಯಾಟಿಂಗ್ ನಂತರ ತನ್ನ ಇನ್ನಿಂಗ್ಸ್ ಬಲವಂತವಾಗಿ ಡಿಕ್ಲೇರ್ ಮಾಡಿಸಿಕೊಂಡ. ಈಗ ಲಿಬ್ಯಾದ ಸರತಿ. ಕ್ಯೂಬಾದ ಕ್ಯಾಸ್ಟ್ರೋ ನಂತರದ ಬಹುಶಃ ವಿಶ್ವದ ದೀರ್ಘಾವಧಿಯ ಅಧ್ಯಕ್ಷನಿರಬೇಕು ಮುಅಮ್ಮರ್  ಗದ್ದಾಫಿ. ಟುನೀಸಿಯಾ, ಈಜಿಪ್ಟ್ ನ ಕ್ರಾಂತಿಗಳನ್ನು ಕಂಡ ಲಿಬ್ಯನ್ನರಿಗೆ ತಮ್ಮ ದೇಶದ ಆಗುಹೋಗುಗಳ ಬಗ್ಗೆ ಹೇಸಿಗೆ ಹುಟ್ಟಲು ಶುರುವಾಯಿತು. ಎಷ್ಟಿದ್ದರೂ ಲಿಬ್ಯಾದ ಸ್ವಾತಂತ್ರ್ಯ ಹೋರಾಟಗಾರ, ಮರಳುಗಾಡಿನ ಸಿಂಹ “ಒಮರ್ ಮುಖ್ತಾರ್” ನ ನಾಡಿನ ಜನರಲ್ಲವೇ? ಆ ಕೆಚ್ಚು ಶರೀರದ ಯಾವುದೋ ಮೂಲೆಯಲ್ಲಾದರೂ ಅಡಗಿ ಕೂತಿರಲೇಬೇಕು. ಜನ ಬೀದಿಗೆ ಇಳಿದರು. ಸಾವು ನೋವುಗಳಾದವು. ಸಾವಿರಾರು ಜನ ಸತ್ತರು ಎನ್ನುವ ಪುಕಾರೂ ಹಬ್ಬಿತು.      

ಈ ಆಧುನಿಕ “ಇ” ಯುಗದ ಕ್ರಾಂತಿಗಳ ವಿಶೇಷ ಏನೆಂದರೆ  ವೆಬ್ ತಾಣಗಳ ಸಾರಾಸಗಟು ಬಳಕೆ. ದೀರ್ಘಾವಧಿ ತಮ್ಮ ಕುರ್ಚಿಗಳಲ್ಲಿ ಕೂತು ಕುಂಭಕರ್ಣ ನ ನಿದ್ದೆಗೆ ಪರವಶರಾದವರ ಪತನಕ್ಕೆ ನಾಂದಿ ಹಾಡಿದ್ದು ಟ್ವಿಟ್ಟರ್, ಫೇಸ್ ಬುಕ್. ಇವು ತಮ್ಮ ಹೆಸರುಗಳನ್ನು ಚರಿತ್ರೆಯ ಪುಟಗಳಿಗೆ ಅಮೋಘವಾಗಿ ಸೇರಿಸಿ ಕೊಂಡವು. ಬರೀ ಕ್ರಾಂತಿ ಗೊಳಗಾದ ದೇಶಗಳ ಜನ ಮಾತ್ರವಲ್ಲ ವಿಶ್ವ ಸಮುದಾಯವೇ ಈ ಜನರ ತುಡಿತಕ್ಕೆ ಸಹಾನುಭೂತಿ ತೋರಿಸಿ ತಮ್ಮ ಟ್ವೀಟು ಗಳನ್ನು ದೇಣಿಗೆಯಾಗಿ ನೀಡಿದರು. ಮುಬಾರಕ್ ದೇಶಕ್ಕೆ ಮಾತ್ರ ಕೆಟ್ಟವನು, ಆದರೆ ಗದ್ದಾಫಿ ಮನುಕುಲಕ್ಕೆ ಕೆಟ್ಟವನು ಎಂದು ಒಬ್ಬ ಟ್ವೀಟಿಸಿದ. ಮುಬಾರಕ್ ತುಂಬಾ ಜನರನ್ನೇನೂ ಕೊಲ್ಲಲಿಲ್ಲ ಆದರೆ ಗದ್ದಾಫಿಗೆ ಮಾತ್ರ ಕೊಳ್ಳುವ ಕೆಲಸ ಸ್ವಲ್ಪ ಸಲೀಸಾಗೇ ಕಂಡಿತು. ಇದ್ದಕ್ಕಿದ್ದ ಹಾಗೆ ಲಿಬ್ಯಾದ ಮಹಿಳೆಯ ಬ್ಲಾಗೊಂದನ್ನು ಓದಿದ ನೆನಪು ಬಂತು. ಬ್ಲಾಗ್ ನ ಹೆಸರು ಸರಿಯಾಗಿ ನೆನಪಿರಲಿಲ್ಲ ಎಂದಿನಂತೆ ಗೂಗ್ಲ್ ಸಹಾಯಕ್ಕೆ ಬಂದ. “ಖದೀಜಾ ತೆರಿ” ಯ ಬ್ಲಾಗ್ ತೆರೆದು ಕೊಂಡಿತು. ಆಕೆ ಸುರಕ್ಷಿತ ಎಂದು ಓದಿ ಮನಸ್ಸು ನಿರಾಳವಾಯಿತು. “ ನಾನಿರುವ ಸ್ಥಳದಿಂದ ನಮಗೇನೂ ತಿಳಿಯುತ್ತಿಲ್ಲ, ನಿಮ್ಮಂತೆಯೇ ನಾನೂ ಕೂಡಾ ನೆಟ್ ಅವಲಂಬಿಸಿದ್ದೇನೆ ಸುದ್ದಿಗಾಗಿ” ಎಂದು ಬರೆದಿದ್ದಳು.

I made a small terrarium. And then I thought how similar Libya is to a terrarium… everything happening inside with no intervention from outside… the whole world is looking in.

ಒಂದು ವೃತ್ತಾಕಾರದ ಗಾಜಿನ ಬುರುಡೆ (terrarium) ಯಲ್ಲಿ ಒಂದಿಷ್ಟು ಮಣ್ಣು, ಎಲೆಗಳನ್ನು ಹಾಕಿ, ಅದರ ಚಿತ್ರ ತನ್ನ ಬ್ಲಾಗ್ ನಲ್ಲಿ ಹಾಕಿ ಮೇಲಿನ ಮಾತುಗಳನ್ನು ಬರೆದಿದ್ದಳು ಖದೀಜಾ. ಆಕೆಯ ಅರ್ಥಗರ್ಭಿತ ಮಾತುಗಳು ತುಂಬಾ ಇಷ್ಟವಾದವು. ತಮಗೂ ಆಗಿರಬಹುದು ಅಲ್ಲವೇ? ಪ್ರಪಂಚದ ಯಾವುದೇ ಮೂಲೆಯಲ್ಲಿಯೂ ನಾವು ನೆಲೆಸಿರ ಬಹುದು ಆದರೆ ಮಾನವ ಭಾವನೆಗಳು ಎಷ್ಟೊಂದು identical ನೋಡಿ. ಲಿಬ್ಯಾ ದೇಶವನ್ನು ನಾನು ಕಂಡಿಲ್ಲ, ಆ ಮಹಿಳೆಯನ್ನು ನಾನು ನೋಡಿಲ್ಲ, ಆದರೂ ಜೇಡ ತನ್ನ ಬಲೆಯನ್ನು ಹೆಣೆದ ಎಲ್ಲರ ಸುತ್ತ ಯಾವುದೇ ಬೇಧ ಭಾವವಿಲ್ಲದೆ. ನಿಜ ಹೇಳಬೇಕೆಂದರೆ ಈ ಸರೀ ರಾತ್ರಿಯಲ್ಲಿ (ಮೂರೂವರೆ ಘಂಟೆ) ಬ್ಲಾಗ್ ಪುಟ ಬರೆಯುವ ಯೋಚನೆ ಇರಲಿಲ್ಲ. ಲಿಬ್ಯಾದ ಬಗ್ಗೆ ಒಂದು ವಾಕ್ಯದ ಅಥವಾ ೧೪೦ ಅಕ್ಷರಗಳ ವಟವಟಗುಟ್ಟೋಣ ಎಂದು ಕೂತಾಗ ಹೊರ ಹೊಮ್ಮಿತು ಈ ಲೇಖನ.      

ಲಿಬ್ಯಾದ ಜನರ ಬಗ್ಗೆ, ಅಲ್ಲಿನ ಜನಜೀವನದ ಬಗ್ಗೆ ಅರಿಯಬೇಕಿದ್ದರೆ ಖದೀಜ ತೆರಿ ಯ ಬ್ಲಾಗ್ ಸಂದರ್ಶಿಸಿ. http://khadijateri.blogspot.com/