ಉಂಡು ಮಲಗೋ ತನಕ

ಗಂಡ ಹೆಂಡಿರು ಕಾದಾಡುವುದು ಸ್ವಾಭಾವಿಕವೇ. ಈ ಕಿತ್ತಾಟ ನೋಡಿದ ನಮ್ಮ ಹಿರಿಯರೂ ಅದನ್ನು ದೊಡ್ಡ ವಿಷಯವಾಗಿ ಪರಿಗಣಿಸದೆ “ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ” ಎಂದು ಜಗಳಕ್ಕೆ ಒಂದು culinary ಮತ್ತು romantic angle ಕೊಟ್ಟು ಮಗ್ಗುಲಾದರು. ಆದರೆ ಎಲ್ಲಾ ಜಗಳಗಳೂ ‘ಮಂಚೂರಿ’ ತಿಂದು ಮಂಚ ಏರಿದ ಕೂಡಲೇ ಕದನ ವಿರಾಮದಲ್ಲಿ ಸಮಾಪ್ತಿ ಆಗೋಲ್ಲ ಎಂದು ಗುಜರಾತಿನ ಘಟನೆಯೊಂದು ಹೇಳುತ್ತದೆ.

ಸುಮಾರು ಹದಿನೈದು ವರ್ಷಗಳಿಂದ ವೈವಾಹಿಕ ಬದುಕಿನ ಕೃಷಿಯಲ್ಲಿ ನೊಗಕ್ಕೆ ನೊಗ ಕೊಟ್ಟು ದುಡಿದು ಮೂರು ಹೆಣ್ಣು, ಒಂದು ಗಂಡು ಮಕ್ಕಳ ಸೃಷ್ಟಿಗೂ ಕಾರಣವಾದ ಗಂಡ ಹೆಂಡಿರ ಟೀಂ ಜಗಳ ಮಾಡುವುದನ್ನು ಬಿಟ್ಟಿರಲಿಲ್ಲ. ಅವಳಿಗೆ ಅವನ ಮೇಲೆ ಸಂಶಯ. ಗಂಡನಿಗೆ ಯಾವುದೋ ಹೆಣ್ಣೊಬ್ಬಳಿದ್ದಾಳೆ ಎಂದು. ಒಂದು ದಿನ ಇದೇ ವಿಷಯದಲ್ಲಿ ಜಗಳವಾಗಿ ಆಕೆ ಗಂಡನ ಮನೆ ಬಿಟ್ಟು ತವರಿಗೆ ಹೋಗುತ್ತಾಳೆ. ಸ್ವಲ್ಪ ದಿನಗಳ ನಂತರ ರಾಜಿ ಮಾಡಿಕೊಂಡ ಪತಿರಾಯ ತನ್ನ ಪತ್ನಿಯನ್ನು ವಾಕ್ ಗೆಂದು ಕರೆಯುತ್ತಾನೆ. ಗಂಡ ಸರಿಯಾದ ಎಂದು ಆಕೆ ಪುಳಕದಿಂದ ಅವನೊಂದಿಗೆ ಹೋಗುತ್ತಾಳೆ. ಹತ್ತಿರದ ಸೇತುವೆ ಮೇಲಿನಿಂದ ನದಿಗೆ ಅವಳನ್ನು ನೂಕಿ, ಮಗುಮ್ಮಾಗಿ ಮನೆಗೆ ಮರಳುತ್ತಾನೆ ತೊಲಗಿತು ಪೀಡೆ ಎಂದು. ಹೋದೆಯಾ ಪಿಚಾಚಿ ಎಂದರೆ ಬಂದೆ ನಾ ಗವಾಕ್ಷೀಲಿ ಎನ್ನುವಂತೆ ಆಕೆ ಮಾರನೆ ದಿನ ಮನೆಗೆ ಮರಳುತ್ತಾಳೆ. ಈತ ಪಿಶಾಚಿ ಬಂತೇನೋ ಎಂದು ಹೌಹಾರಿ ಓಟ ಕೀಳುವಾಗ ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಾಳೆ. ನದಿಗೆ ಬಿದ್ದ ಈಕೆಯನ್ನು ಅಲ್ಲಿಯೇ ದಡದಲ್ಲಿದ್ದ ಜನ ರಕ್ಷಿಸಿರುತ್ತಾರೆ. ಅಬ್ಬಾ, ದುರಂತದಿಂದ ಮಹಿಳೆ ಪಾರಾದಳು ಎಂದು ಸಂಸದಲ್ಲಿದ್ದಂತೆಯೇ ೧೯೮೮ ರಲ್ಲಿ ಬಂದ ಹಿಂದಿ ಸಿನಿಮಾ ನೆನಪಿಗೆ ಬಂತು.

ಖೂನ್ ಭರೀ ಮಾಂಗ್ (ರಕ್ತ ತುಂಬಿದ ಬೈತಲೆ) ಎನ್ನುವ ಚಿತ್ರದಲ್ಲಿ ವಿಧವೆಯಾದ ರೇಖಾಳನ್ನು ಆಕೆಯ ಪ್ರೇಮಿ ಕಬೀರ್ ಬೇಡಿ ದೋಣಿಯಿಂದ ನದಿಗೆ ತಳ್ಳಿ ಬಿಡುತ್ತಾನೆ. ಮೊಸಳೆಯ ಆಕ್ರಮಣಕ್ಕೆ ತುತ್ತಾದರೂ ಪವಾಡ ಸದೃಶವಾಗಿ ಗಾಯಗಳೊಂದಿಗೆ ರೇಖಾ ಪಾರಾಗಿ ಪ್ರತ್ಯಕ್ಷಗೊಳ್ಳುತ್ತಾಳೆ ಸೇಡು ತೀರಿಸಿ ಕೊಳ್ಳಲು. ಈ ಚಿತ್ರ ಆಸ್ಟ್ರೇಲಿಯಾದ return to eden ಧಾರಾವಾಹಿಯ ಡಬ್ಬಿಂಗ್ ಅಂತೆ. ಗುಜರಾತಿ ದಂಪತಿಗಳ ಈ ಗುದ್ದಾಟ, ದುರಂತದಲ್ಲಿ ಅವಸಾನ ಕಾಣಬಹುದಾಗಿದ್ದ ಘಟನೆ, ಗಂಡನ ಲಾಕ್ ಅಪ್ ನಲ್ಲಿ ಸಮಾಪ್ತಿಯಾದರೂ ಇದನ್ನು ಓದಿದ ಜನ ಮಾತ್ರ ತಮ್ಮ ನಾಲಗೆ ಹರಿ ಬಿಡಲು ಒಳ್ಳೆಯ ಅವಕಾಶ ಎಂದು ಸಿದ್ಧರಾದರು. “ಹೆಂಡತಿಗೆ ಈಜು ಬರೋಲ್ಲ ಎಂದು ಅರಿತು ಪಾಪ ಗಂಡ ನೀರಿಗೆ ತಳ್ಳಿದ್ದು. ಇದು ಮೋಸ. ತನಗೆ ಈಜು ಬರುತ್ತೆ ಎಂದು ಹೆಂಡತಿ ಗಂಡನಿಗೆ ಹೇಳದೆ ಮೋಸ ಮಾಡಿದಳು” ಎಂದು ಒಬ್ಬ ಕೊರಗಿದಾಗ ಕೆರಳಿದ ಮಹಿಳೆಯೊಬ್ಬಳು ಹೇಳಿದ್ದು, “ನಿನ್ನ ತಾಯಿಗೆ ಈ ಗತಿ ಬಂದು ಬದುಕುಳಿಯದೆ ಸತ್ತಿದ್ದರೆ ನಿನ್ನಂಥವನಿಗೆ ಜನ್ಮ ಕೊಡುವುದು ತಪ್ಪುತ್ತಿತ್ತು” ಎಂದು ಕಿಡಿ ಕಾರಿದಳು.

ನನ್ನ ಪ್ರಕಾರ ಮದುವೆಯಾಗೋ ಹೆಣ್ಣು ಮಕ್ಕಳು ಕರಾಟೆ ಕಲಿತರೆ ಸಾಲದು, ಈಜೂ ಕಲಿಯಬೇಕು, ಸೇತುವೆ ಮೇಲಿನ “ಖೊಕ್” ಆಡುವ ಸಂದರ್ಭ ಬಂದರೆ ಸಹಾಯವಾಗಬಹುದು.

ಭಾರತೀಯನಾದರೆ ಹಿಂದಿ ಗೊತ್ತಿರಲೇಬೇಕೆ?

ಕಳೆದ ವಾರ ಒಬ್ಬ ಚಾಟ್ ಫ್ರೆಂಡ್ ಪರಿಚಯವಾದ. ಚಿಕ್ಕ ಹುಡುಗ. ಇಂಜಿನಿಯರಿಂಗ್ ಮಾಡುತ್ತಿದ್ದಾನೆ. ಗುಜರಾತ್ ಮೂಲದವ. ಚಾಟ್ ಮಾಡಿದ ಮಾರನೆ ದಿನವೇ ನನ್ನನ್ನು ಇಷ್ಟ ಪಟ್ಟ ಎಂದು ಕಾಣುತ್ತದೆ, ಮೊಬೈಲ್ ನಂಬರ್ ಕೊಡು ಎಂದ. ನಾನು ಇಲ್ಲ, ನಾನು ಭಾರತದಲ್ಲಿ ಅಲ್ಲ ಇರೋದು, ನೀನು ನಾನಿರುವಲ್ಲಿಗೆ ಫೋನ್ ಮಾಡಿದರೆ ನಿನಗೆ ದುಬಾರಿ ಆಗುತ್ತೆ ಎಂದು ಹೇಳಿದೆ. ಯುವಜನರಲ್ಲಿ ಇದೊಂದು ರೀತಿಯ ದೌರ್ಬಲ್ಯ. ತಮಗೆ ಯಾರದೂ ಇಷ್ಟ ಎಂದು ತೋರಿ ಬಿಟ್ಟರೆ ತಮ್ಮ ಮನೆ ಅಡ್ರೆಸ್, ಫೋನ್ ನಂಬರ್, ತನ್ನ ಅಪ್ಪ ಮಾಡೋ ಧಂಧೆ ಕುರಿತು ಎಲ್ಲಾ ಮಾಹಿತಿಯನ್ನೂ ಒಪ್ಪಿಸಿ ಬಿಡುತ್ತಾರೆ. ಎಲ್ಲವನ್ನೂ ನಂಬುವ ಮುಗ್ಧ ಗುಣ. ಈ ಗುಣವೇ ಅವರಿಗೆ ವೈರಿಯಾಗಿ ತಿರುಗೇಟು ನೀಡುತ್ತದೆ ಎಂದು ಅವರಿಗೆ ಅರಿವಾಗೋದು ತಿರುಗೇಟು ಬಿದ್ದಾಗಲೇ. ಲಾರ್ಡ್ ಚೆಸ್ಟರ್ ಫೀಲ್ಡ್ ತನ್ನ ಮಗ ಫಿಲಿಪ್ ಸ್ಟಾನ್ ಹೋಪ್ ಗೆ  ಬರೆದ ಪತ್ರದಲ್ಲಿ ಹೀಗೆ ಹೇಳುತ್ತಾನೆ, People of your age have, commonly, an unguarded frankness about them; which makes them the easy prey and bubbles of the artful  and the inexperienced: they look upon  every knave, or fool, who tells them that he is their friend, to be really so; and pay that profession of simulated friendship, with an indiscreet and unbounded confidence, always to their loss, often to their ruin.

ಇರಲಿ, ಇಲ್ಲಿನ ವಿಷಯ ಸ್ವಲ್ಪ ಬೇರೆ. ಸ್ವಲ್ಪ ದಿನಗಳಿಂದ ಚಾಟ್ ಮಾಡುತ್ತಿದ್ದ ಈತ ಆಗಾಗ are you original Indian, are you basically Indian ಎಂದು ತಲೆ ತಿನ್ನುತ್ತಿದ್ದ. ಹೌದಪ್ಪ, ನಾನು ಭಾರತೀಯನೇ, ಕಾಸಿನ ಆಸೆಗೆ ಬಿದ್ದು ಮರಳು ಗಾಡಿನಲ್ಲಿ ಬಂದು ಬಿದ್ದಿದ್ದೇನೆ ಎಂದು ಎಷ್ಟು ಸಲ ಹೇಳಿದರೂ ಈ ಪ್ರಶ್ನೆಯನ್ನು ಪುನರಾವರ್ತಿಸುತ್ತಿರುತ್ತಾನೆ. ಮರೆವಿನ ಸ್ವಭಾವ ಇರಬೇಕು ಎಂದು ಅವನು ಕೇಳಿದಾಗಲೆಲ್ಲಾ ನಾನು ಉತ್ತರಿಸುತ್ತಿದ್ದೆ. ಅವನ ಪ್ರಶ್ನೆಯಲ್ಲಿ ಯಾವುದೇ ರಾಜಕೀಯ ವಾಸನೆ ಕಾಣದ ಕಾರಣ ನಾನು ಭಾರತೀಯ ಎಂದು comfirm ಮಾಡುತ್ತಿದ್ದೆ. ಈಗ ಸ್ವಲ್ಪ ಮೊದಲು ಚಾಟ್ ನಲ್ಲಿ ಕಾಣಿಸಿಕೊಂಡು ನಾನು ನಿನಗೆ ಗುಡ್ ಬೈ ಹೇಳುತ್ತೇನೆ, ನಾಲಇಂದ ಕಾಲೇಜಿದೆ,  ನಾನು ಕಲಿಯುವ ಕಾಲೇಜಿನ ಲ್ಲಿ ಚಾಟ್ ಸೌಕರ್ಯ ಇಲ್ಲ, ಎಂದಾದರೂ ಭೇಟಿ ಯಾಗೋಣ, ನಿನ್ನ ಪರಿವಾರಕ್ಕೆ ನನ್ನ ಶುಭಾಶಯಗಳು ಎಂದ. ಚೆನ್ನಾಗಿ  ಓದಿ, ಡಿಗ್ರೀ ಪಡೆದುಕೋ, ನಿನ್ನ ಅಪ್ಪ ಅಮ್ಮನಿಗೆ ನಿರಾಶೆ ಮಾಡೋ ಯಾವ ಕೆಲಸವನ್ನೂ ಮಾಡಬೇಡ ಎಂದು ಉಪದೇಶಿಸಿದಾಗ ಆತ ಧನ್ಯವಾದ ಅರ್ಪಿಸಿ ಕೊನೆಗೆ ಅದೇ ಹಳೇ ಬಾಂಬ್ ಸಿಡಿಸಿದ….

are you basically Indian? ಒಹ್, ಮತ್ತೊಮ್ಮೆ ಕೇಳಿದನಲ್ಲಾ, ಇವನಿಗೆನಾದರೂ alzheimer’s ಅಥವಾ dementia ದಂಥ ಕಾಯಿಲೆ ತಾಗಿರಬಹುದೇ ಎಂದು ಆ ಕ್ಷಣದಲ್ಲಿ ಅನ್ನಿಸಿದರೂ, ಛೆ, ಇನ್ನೂ ಚಿಕ್ಕ ವಯಸ್ಸು, ಬಿಡ್ತು ಅನ್ನು ಎಂದು ಕೋಪ ನೆತ್ತಿಗೇರುತ್ತಿದ್ದರೂ, ಸಾವರಿಸಿಕೊಂಡು ಹೌದಪ್ಪಾ ನಾನು ಇಂಡಿಯನ್, ಎಷ್ಟು ಸಲ ಹೇಳಬೇಕು ನಿನಗೆ ಅಮಿತ್ ಎಂದಾಗ ಅವನು ಹೇಳಿದ ಕ್ಷಮಿಸಿ, ನೀವು ಭಾರತೀಯರಾದರೆ ಹಿಂದಿ ಗೊತ್ತಿರಲೇಬೇಕು ಅಲ್ಲವೇ ಎಂದ. ಹಿಂದಿ ಬರುತ್ತೆ ನನಗೆ ಎಂದಾಗ ಅವನಿಗೆ ಸಮಾಧಾನ ಆದ ಹಾಗೆ ತೋರಿತು.

 

ಆತ ಗುಜರಾತಿ. ಅವರ ಹಿಂದಿಯ ಚೆಂದ ಎಲ್ಲರಿಗೂ ತಿಳಿದದ್ದೇ. ಆದರೂ ಅವನ ಭಾವನೆ ಭಾರತೀಯನಾದರೆ ಹಿಂದಿ ಗೊತ್ತಿರಲೇಬೇಕು ಎಂಬುದು. ಇದನ್ನು ಬರೆದಿದ್ದು ಭಾರತೀಯನಾಗಲು ಹಿಂದಿ ಬೇಕೋ, ಕನ್ನಡ ಸಾಕೋ ಎನ್ನುವ ಚರ್ಚೆ ಹುಟ್ಟುಹಾಕಲು ಅಲ್ಲ. ಹೀಗೇ ಸುಮ್ಮನೆ ಅಂತಾರಲ್ಲ, ಹಾಗೆ…

ಭಾರತೀಯನಾಗಲು ಹಿಂದಿ ಗೊತ್ತಿರುವುದು prerequisite ನಿಬಂಧನೆಯೋ?

ಎರಡು ಘಟನೆಗಳು, ಎರಡು ಸಾವು

ಒಬ್ಬಾತ  ತನ್ನ ದಿನದ ಕೆಲಸ ಮುಗಿದ ನಂತರ ತನ್ನ ಮಕ್ಕಳಿಗೆಂದು ಗೋಬಿ ಮಂಚೂರಿ ಕಟ್ಟಿಸಿಕೊಂಡು ಮನೆಗೆ ಹೋಗುತ್ತಾನೆ. ಅದನ್ನು ತಿಂದ ಮಕ್ಕಳು ತುಂಬಾ ಖಾರ ಆಯಿತು ಎಂದು ಅಪ್ಪನಲ್ಲಿ ದೂರುತ್ತಾರೆ. ಕೋಪಗೊಂಡ ಅಪ್ಪ ಗೋಬಿ ಮಾರಿದ ಹೋಟೆಲ್ ಗೆ ಬಂದು ಇದರ ಬಗ್ಗೆ ದೂರುತ್ತಾನೆ. ರಾತ್ರಿಯಾದ್ದರಿಂದ ಹೋಟೆಲ್ ಮುಚ್ಚುತ್ತಿದ ಯಜಮಾನ ದೂರಿದ ಗಿರಾಕಿಯ ಮೇಲೆ ಕೈ ಮಾಡುತ್ತಾನೆ, ಇನ್ನಷ್ಟು ತದುಕಲು ಕೆಲಸಗಾರರನ್ನೂ ಕರೆಸುತ್ತಾನೆ. ಎಲ್ಲರ ಬಡಿತ ತಿಂದ ಗಿರಾಕಿ ಕೊನೆಯುಸಿರೆಳೆಯುತ್ತಾನೆ. ಎಂಥ ದುರಂತ ನೋಡಿ. ಮಕ್ಕಳು ಆಸೆ ಪಡುತ್ತಾರೆ ಎಂದೋ ಅಥವಾ ಬೆಳಿಗ್ಗೆ ಮನೆಯಿಂದ ಹೊರಡುವಾಗ ಅಪ್ಪಾ, ಬರುವಾಗ ಗೋಬಿ ತಗೊಂಡು ಬಾ ಎಂದು ಹೇಳಿದ ಪುಟಾಣಿಗಳ ಆಸೆ ಪೂರೈಸಲು ಕಟ್ಟಿಸಿಕೊಂಡು ತಂದ ತಿಂಡಿ ಅವನ ಅವಸಾನಕ್ಕೆ ಕಾರಣ ವಾಗಬಹುದು ಎಂದು ಅವನಿಗೆ ಖಂಡಿತ ಹೊಳೆದಿರಲಿಕ್ಕಿಲ್ಲ. ಬೆಂಗಳೂರಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಗಾಭರಿ ಹುಟ್ಟಿಸುತ್ತದೆ. ಇಷ್ಟು ಕ್ಷುಲ್ಲಕ, ಸಾಧಾರಣ ಸಮಸ್ಯೆಯೊಂದು ಒಬ್ಬನ ಸಾವಿನಲ್ಲಿ ಸಮಾಪ್ತಿಯಾದರೆ ನಮ್ಮ ಸಮಾಜ ಯಾವ ದಿಕ್ಕಿನಲ್ಲಿ ಸಾಗುತ್ತಿದೆ? ನಮ್ಮ ಸಹನೆಯ ಮಿತಿ ಈ ರೀತಿ ತಳ ಮುಟ್ಟಲು ಕಾರಣವೇನು? ದಿನ ಬೆಳಗಾದರೆ ಈ ತೆರನಾದ ಮನಕಲಕುವ, ನಾಗರೀಕ ಸಮಾಜ ತಲೆ ತಗ್ಗಿಸುವ ಕೆಲಸಗಳು ದೇಶದ ಎಲ್ಲೆಡೆ ವರದಿ ಆಗುತ್ತಿದ್ದರೂ ನಮಗೆ ಅದು ಒಂದು ಪುಟ್ಟ distraction ಮಾತ್ರವಾಗಿ ಗೋಚರಿಸುವುದು ಖೇದಕರ.   

ಮೇಲಿನ ದುರಂತ ದಕ್ಷಿಣ ಭಾರತದ್ದಾದರೆ ಈಗ ಬನ್ನಿ ಉತ್ತರ ಭಾರತಕ್ಕೆ.

ತಾನು ಪ್ರೀತಿಸಿದವನನ್ನು ತನ್ನ ತಂದೆ ಇಷ್ಟ ಪಡಲಿಲ್ಲ ಎಂದು ಪ್ರಿಯಕರ ಮತ್ತು ಅವನ ಮಿತ್ರನನ್ನು ತನ್ನ ತಂದೆಯನ್ನು ಕೊಲ್ಲಲು ಮಗಳು ನಿಯಮಿಸುತ್ತಾಳೆ. ಅವರಿಬ್ಬರೂ ಸೇರಿ ಹುಡುಗಿಯ ತಂದೆಗೆ ಗತಿ ಕಾಣಿಸುತ್ತಾರೆ. ನಂಬಲು ಸಾಧ್ಯವೇ ಈ ಘಟನೆಯನ್ನು? ಇಂಥ ಪೈಶಾಚಿಕ ಪ್ರವೃತ್ತಿಗೆ ಕಾರಣವಾದರೂ ಏನಿರಬಹುದು? ಅಸಹನೆಯ ಕಿಡಿ, ಧ್ವೇಷದ ಮನೋಭಾವ ಇವಕ್ಕೆ ಕಾರಣ ಎಂದು ದೂರುವಂತಿಲ್ಲ. ಏಕೆಂದರೆ ಇವು ಆ ಕ್ಷಣದಲ್ಲಿ ಹುಟ್ಟಿಕೊಂಡ ವಿಕೃತ ಕೃತ್ಯ. ವ್ಯವಸ್ಥಿತವಾಗಿ ನಡೆಯುವ ಹಲ್ಲೆಗಳಿಗೆ ಪರಿಹಾರ ಹಾಗೂ ಹೀಗೂ ಕಂಡು ಕೊಳ್ಳಬಹುದು. ಜನರನ್ನು ಜಾಗೃತಿ ಗೊಳಿಸಬಹುದು. ಧ್ವೇಷ ದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ಮನವರಿಕೆ ಮಾಡಿ ಕೊಡಬಹುದು. ಅಂಥ ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಕ್ರಮಗಳನ್ನು ಕೈಗೊಳ್ಳ ಬಹುದು. ಆದರೆ ಈ ರೀತಿ ಥಟ್ಟನೆ ಉದ್ಭವವಾಗುವ ಹಿಂಸೆಗೆ ಏನು ಪರಿಹಾರ?

ಮೇಲಿನ ಎರಡು ಪೈಶಾಚಿಕ ಘಟನೆಗಳು ಎಲ್ಲೋ ಒಂದೋ ಎರಡೋ ಆಗಿದ್ದಿದ್ದರೆ ನಿಟ್ಟುಸಿರು ಬಿಟ್ಟು ಮುಂದೆ ಸಾಗಬಹುದಿತ್ತು. ದಿನ ಬೆಳಗಾದರೆ ನಮಗೆ ಎದುರಾಗುವುದು ಇಂಥ ಅವಿವೇಕತನದಿಂದ ಕೂಡಿದ ಹಿಂಸೆಗಳೇ. ಚಿಲ್ಲರೆಗಾಗಿ ಕೊಲೆ, ಚೌಕಾಶಿ ಮಾಡಿದ್ದಕ್ಕೆ ಕೊಲೆ, ಇಟ್ಟುಕೊಂಡವಳಿಗಾಗಿ ಕೊಲೆ, ತನ್ನ ಸೋದರಿಯನ್ನು ಪ್ರೀತಿಸಿದ್ದಕ್ಕಾಗಿ ಕೊಲೆ…………ಅಸಹನೆಯ ಕೂಪಕ್ಕೆ ದಬ್ಬಲ್ಪಡುತ್ತಿರುವ ನಮ್ಮ ಸಮಾಜವನ್ನು, ಸಂಸ್ಕಾರವನ್ನು ಪಾರು ಮಾಡಲು ನಾವೇನು ಮಾಡಬಹುದು? ನಾಗರೀಕ, ಪ್ರಜ್ಞಾವಂತ ಸಮಾಜ ಕೇಳಿಕೊಳ್ಳಬೇಕಾದ ಪ್ರಶ್ನೆ.

ಕೋಶ ಓದು, ಇಲ್ಲಾ ದೇಶ ಸುತ್ತು

 ಕೋಶ ಓದು ಇಲ್ಲಾ ದೇಶ ಬಿಡು….ಹಾಂ, ಇದೇನಿದು, ನನ್ನ ಕಣ್ಣುಗಳು ನನ್ನನ್ನು ಮೋಸ ಮಾಡುತ್ತಿಲ್ಲವಷ್ಟೇ? ಶೀರ್ಷಿಕೆ ಯಲ್ಲಿ “ಕೋಶ ಓದು, ದೇಶ ಸುತ್ತು” ಎಂದಿರುವಾಗ ಲೇಖನದ ಆರಂಭದಲ್ಲೇ ಅದ್ಹೇಗೆ ಬದಲಾಗಿ ಬಿಟ್ಟಿತು ಶೀಷಿಕೆ? ರಾಜಕಾರಣಿ ತನ್ನ ಮಾತುಗಳನ್ನು ಪಲ್ಟಾಯಿಸುವ ರೀತಿ ಎಂದು ಯೋಚಿಸಿದಿರಾ?

ಬ್ಲಾಗ್ ಒಂದರಲ್ಲಿ ಬಂದ ಲೇಖನದಲ್ಲಿ ಈ ಕುರಿತು ಓದಿದೆ. ಕೋಲಾರದಲ್ಲಿ, ಸಮಾರಂಭ ವೊಂದರಲ್ಲಿ ಮಾನ್ಯ ಸಚಿವರು “ಭಗವದ್ಗೀತೆ ಬೇಡವಾದವರು ಭಾರತ ಬಿಟ್ಟು ತೊಲಗಿ” ಎಂದು ಗುಡುಗಿದರು ಎಂದು ಬರೆದಿದ್ದರು. ಸನ್ಮಾನ್ಯ ಶಿಕ್ಷಣ ಮಂತ್ರಿಗಳೇ ಹೀಗೆ ಹೇಳಿದಾಗ ಸಮಾಜ ಯಾವ ರೀತಿ ಪ್ರತಿಸ್ಪಂದಿಸಬಹುದು. ಸಮಾಜದಲ್ಲಿ ವಿಷಬೀಜ ಬಿತ್ತಲೆಂದೇ ಹುಟ್ಟಿ ಕೊಂಡ ಮಾಧ್ಯಮಗಳು ಸಚಿವರ ಈ rhetoric ನ ಎಳೆ ಹಿಡಿದು ಕೊಂಡು ಸಮಾಜದಲ್ಲಿ ಮತ್ತಷ್ಟು ಗದ್ದಲ ಗೊಂದಲಕ್ಕೆ ಕಾರಣರಾಗಲಾರರೆ? ಅತ್ಯಂತ ಜವಾಬ್ದಾರೀ ಹುದ್ದೆಯಲ್ಲಿರುವವರು, ಅದರಲ್ಲೂ ಜನರಿಂದ ನೇರವಾಗಿ ಆರಿಸಲ್ಪಟ್ಟವರ ಬಾಯಲ್ಲೇ ಇಂಥ ಮಾತುಗಳು ಉದುರಿದರೆ ಜನಸಾಮಾನ್ಯರ ಪಾಡೇನು?

ಕೋಶ ಓದು, ದೇಶ ಸುತ್ತು ಹಳೇ ಕಾಲದ ಮುತ್ಸದ್ದಿಗಳು, ಹಿರಿಯರು ಹೇಳಿದ್ದು. ಈ ಮಾತುಗಳಲ್ಲಿ ಅನುಭವ ತುಂಬಿ ತುಳುಕುತ್ತದೆ. ಕೋಶ ಓದು ಇಲ್ಲಾ ದೇಶ ಬಿಡು ಎನ್ನುವುದು ಆಧುನಿಕ ಮನೋಭಾವದ ಹಿರಿಯರು. ಇಂಟರ್ನೆಟ್ ಯುಗದ ಪ್ರಾಡಕ್ಟ್ ಗಳು. ಒಂದರಲ್ಲಿ ಅನುಭವ ತುಂಬಿ ತುಳುಕುತ್ತಿದ್ದರೆ, ಮತ್ತೊಂದರಲ್ಲಿ ಅಸಹನೆಯ ಕೊಡ ತುಂಬಿ ತುಳುಕುತ್ತಿರುತ್ತದೆ. ನಮ್ಮ ಪ್ರಯಾಣ ಯಾವ ಕಡೆ ಎಂದು ಅರಿಯದೆ ಜನ ಸಾಮಾನ್ಯ ಕಕ್ಕಾಬಿಕ್ಕಿಯಾಗುತ್ತಾನೆ ಈ ಮಾತುಗಳನ್ನು ಕೇಳಿ. ಇನ್ನು ಶಾಲೆಗೆ ಹೋಗುವ ಮಕ್ಕಳ ಸ್ಥಿತಿ? ವಿದ್ಯಾರ್ಥಿಯೊಬ್ಬ ಶಿಕ್ಷಕನಲ್ಲಿ ತನ್ನ ಅಳಲನ್ನು ತೋಡಿ ಕೊಳ್ಳುತ್ತಾನೆ. ತನಗೆ ಆಂಗ್ಲ ಬಾಷೆ ತುಂಬಾ ಕಷ್ಟ ಆಗ್ತಾಯಿದೆ, ತಲೆಗೆ ಏನೂ ಹೋಗೋದಿಲ್ಲ ಎಂದು. ಅದಕ್ಕೆ ಶಿಕ್ಷಕ ತಲೆಗೆ ಹೋಗದಿದ್ದರೆ ಶಾಲೆ ಬಿಡು ಅಥವಾ ಊರು ಬಿಡು ಎಂದು terrorize ಮಾಡಬಾರದು. ಅಸಹಾಯಕನಾಗಿ ಬಂದ ಶಿಷ್ಯನ ತಲೆ ನೇವರಿಸಿ ಇನ್ನಷ್ಟು ಶ್ರಮ ಪಡಲು ಹೇಳಬೇಕು ಅಥವಾ ಬೇರಾವುದಾದರೂ ಪರಿಹಾರ ಸೂಚಿಸಿ ಅವನಲ್ಲಿ ವಿದ್ಯೆ ಬಗ್ಗೆ ಆಸಕ್ತಿ ಮೂಡಿಸಬೇಕು. ಅದು ಬಿಟ್ಟು ಅವನನ್ನು ಗದರಿಸಿ ಬೆದರಿಸಿ ದಾರಿಗೆ ತರಲು ನೋಡಿದರೆ ಆಗದ ಮಾತು. ಶಿಕ್ಷಕ ರಿಯಾಕ್ಟಿವ್ ಆಗಬಾರದು. compassionate ಆಗಬೇಕು.

“ಈ ಲೋಕದಲ್ಲಾಗಲೀ, ಬೇರೆಲ್ಲೇ ಆಗಲಿ ಸಂಶಯ ಪಡುವವನಿಗೆ ಸಂತೋಷ ಸಿಗದು”

“ಕೋಪದ ಕಾರಣ ಭ್ರಮೆ ಹುಟ್ಟುತ್ತದೆ. ಭ್ರಮೆಯ ಕಾರಣ ಮನಸ್ಸು ಗೊಂದಲಗೊಳ್ಳುತ್ತದೆ. ಮನಸ್ಸು ಗೊಂದಲ ಗೊಂಡಾಗ ತರ್ಕ ನಾಶವಾಗುತ್ತದೆ. ತರ್ಕ ನಾಶವಾದಾಗ ಮನುಷ್ಯ ಬೀಳುತ್ತಾನೆ”

ಇಂಥ ನುಡಿ ಮುತ್ತುಗಳನ್ನು ನೀಡಿದ ಭಗವದ್ಗೀತೆಯ ಅಧ್ಯಯನಕ್ಕೆ ಈ ರೀತಿಯ ಧಮಕಿ ಕೂಡಿದ “ಉತ್ತೇಜನ” ವೇ ಹಿರಿಯರಿಂದ? – ಗೀತೆ ಗೀತೆಯಲ್ಲಿರುವ ಇಂಥ ಸಂದೇಶಗಳನ್ನು ಜನರಿಗೆ ತಿಳಿ ಹೇಳುವುದು ತರವೋ ಅಥವಾ ಇದನ್ನು ಬೇಡ ಎನ್ನುವವರು ದೇಶ ಬಿಟ್ಟು ತೊಲಗಲಿ ಎಂದು ಗೀತೆಯಿಂದ ಜನರನ್ನು ದೂರ ಓಡಿಸುವುದು ತರವೋ? ಸಚಿವರ ಈ ಹೇಳಿಕೆಯ ಔಚಿತ್ಯವನ್ನು ಜನರು ಪ್ರಶ್ನಿಸಬೇಕು. ಶಾಲೆಗಳಲ್ಲಿ ಗೀತೆ, ಕುರಾನ್, ಬೈಬಲ್, ಗುರುಗ್ರಂಥ್ ಸಾಹಿಬ್, ಬುದ್ಧರ ತ್ರಿಪಿಟಕ, ಪಾರ್ಸಿಗಳ ‘ಜೆಂದ್ ಅವೆಸ್ತಾ’, ಯಹೂದ್ಯರ ‘ತೋರಾ’ ಹೀಗೆ ಹೇಳಿಕೊಡುತ್ತಾ ಕೂತರೆ ಗಣಿತ, ವಿಜ್ಞಾನ, ಸಮಾಜ ಶಾಸ್ತ್ರಗಳನ್ನು ಹೇಳಿಕೊಡಲು ಸಮಯ ಇರುವುದೇ ಎಂದು ಪ್ರಶ್ನಿಸುವವರಿದ್ದಾರೆ. ಪರಿಹಾರವಾಗಿ ಎಲ್ಲಾ ಧರ್ಮಗಳ ಸಾರವನ್ನು ಹೇಳಿಕೊಡುವ ಒಂದು ಪುಸ್ತಕದ ರಚನೆಯಾಗಲಿ. ಗೀತೆ, ಕುರಾನ್, ಬೈಬಲ್ ಮುಂತಾದವುಗಳ ಸುವರ್ಣ ವಾಕ್ಯಗಳು ಅದರಲ್ಲಿ ಸೇರಿರಲಿ. ವಿದ್ಯಾರ್ಥಿಗಳು ನಾವೆಂಥ ಸೊಗಸಾದ ಬಹು ಸಂಸ್ಕೃತಿ ಸಮಾಜದಲ್ಲಿ ಬದುಕುತ್ತಿದ್ದೇವೆ ಎನ್ನೋ ಭಾವನೆ ಬೆಳೆಸಿಕೊಳ್ಳಲಿ.

ಎಲ್ಲರನ್ನೂ ಆದರಿಸೋಣ, ಎಲ್ಲವನ್ನೂ ಗೌರವಿಸೋಣ

ಹಿಂದೂ ದೇವರುಗಳ ಬಗ್ಗೆ ಅಸಹ್ಯವಾಗಿ, ಚಿತ್ರಿಸುವ ಚಾಳಿ ಕುರಿತು ಕನ್ನಡದ ಖ್ಯಾತ ಆನ್ ಲೈನ್ ತಾಣದಲ್ಲಿ ಒಬ್ಬರು ಖೇದ, ಆಕ್ರೋಶ ವ್ಯಕ್ತಪಡಿಸಿದ್ದರು. ಕಲೆಯ ಹೆಸರಿನಲ್ಲಿ, ಸೃಜನಶೀಲತೆಯ ಹೆಸರಿನಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಧಾರ್ಮಿಕ ಭಾವನೆಗಳನ್ನ ಕೆರಳಿಸುವುದು, ನಮ್ಬಿಕೆಗಳನ್ನು ಘಾಸಿಗೊಳಿಸುವುದು ತರವಲ್ಲ. ಸೃಜನಶೀಲತೆ ಅಥವಾ ಬೇರಾವುದಾದರೂ ಪ್ರತಿಭೆಯನ್ನು ಸಾಕಾರಗೊಳಿಸಲು ಹತ್ತು ಹಲವು ಮಾರ್ಗಗಳಿವೆ. ಧಾರ್ಮಿಕ ಭಾವನೆಗಳನ್ನು ಕೆರಳಿಸುವ, ಕಲೆ ಕುಚೋದ್ಯದಿಂದ ಕೂಡಿದ್ದು. ಈ ಕುಚೋದ್ಯ ಇಸ್ಲಾಮ್ ಧರ್ಮದ ಮೇಲೆ ಪ್ರಯೋಗವಾದಷ್ಟು ಬೇರಾವ ಧರ್ಮದ ಮೇಲೂ ಆಗಿರಲಾರದು. ಅಂಥ ಕಲೆಯನ್ನು ಮುಸ್ಲಿಮರು ಖಂಡಿಸಿದಾಗ ಅವರನ್ನು ಬೆಂಬಲಿಸಲು ಯಾರೂ ಇರಲಿಲ್ಲ. ಬದಲಿಗೆ ಮುಸ್ಲಿಮರಿಗೆ ಸಿಕ್ಕಿದ್ದು ಕಲೆಯ ಬಗ್ಗೆ, ಸೃಜನಶೀಲತೆಯ ಬಗ್ಗೆ, ಆಧುನಿಕ ಬದುಕಿನ ಬಗ್ಗೆ ಪಾಠ. ಚಿಕ್ಕತನವನ್ನು ಬಿಟ್ಟು ನೀವು ಬೆಳೆಯಬೇಕು ಎನ್ನುವ ಕಿವಿಮಾತು. ಈಗ ಅದೇ ಪಿಶಾಚಿ ತಮ್ಮ ಹೊಸ್ತಿಲಿಗೆ ಬಂದು ನಿಂತಾಗ ಜನ ಹೌಹಾರುತ್ತಿದ್ದಾರೆ. reactions strangely different.

೨೦೦೩ ರಲ್ಲಿ ಡ್ಯಾನಿಶ್ ವ್ಯಂಗ್ಯಚಿತ್ರಕಾರ “ಕ್ರಿಸ್ಟಫರ್ ಜೈಲರ್” ಯೇಸು ಕ್ರಿಸ್ತರ ಬಗೆಗಿನ ಕೆಲವು ಚಿತ್ರಗಳನ್ನ ಅಲ್ಲಿನ ಖ್ಯಾತ ಪತ್ರಿಕೆ Jyllands-Posten ಗೆ ಕಳಿಸಿದ. ಸಂಪಾದಕ ಈತನಿಗೆ ‘ಈ ಮೇಲ್’ ಕಳಿಸಿ ಈ ಚಿತ್ರಗಳನ್ನು ಕ್ರೈಸ್ತರು ನೋಡಿ ಆನಂದಿಸಲಿಕ್ಕಿಲ್ಲ ಮತ್ತು ಕ್ರೈಸ್ತರ ಭಾವನೆಗಳಿಗೆ ನೋವುಂಟು ಮಾಡುವುದರಿಂದ ಅದನ್ನು ಪ್ರಕಟಿಸಲು ಸಾಧ್ಯವಿಲ್ಲ ಎಂದು ವಿವರಿಸಿದ. ಇದೇ ಪತ್ರಿಕೆ ೨೦೦೫ ರಲ್ಲಿ ಪ್ರವಾದಿ ಮುಹಮ್ಮದರ ಕಾರ್ಟೂನ್ ಗಳನ್ನು ಪ್ರದರ್ಶಿಸಿ ತನ್ನ ಕೊಳಕು ‘ಡಬಲ್ ಸ್ಟ್ಯಾಂಡರ್ಡ್’ ಅನ್ನು ಸೊಗಸಾಗಿ ಪ್ರದರ್ಶಿಸಿತು.

ಧಾರ್ಮಿಕ ಕುರುಹುಗಳನ್ನು ನಮಗೆ ಬೇಕಾದ ಸ್ಥಳಗಳಲ್ಲಿ, ಬೇಕಾದ ರೀತಿಯಲ್ಲಿ ಬಳಸಿ ಕೊಂಡಾಗ ಅದರ ಬಗ್ಗೆ ಗೌರವ, ಭಕ್ತಿ ತಂತಾನೇ ಕಡಿಮೆಯಾಗುತ್ತದೆ. ಧರ್ಮ ವೈಯಕ್ತಿಕವಾಗಿರಬೇಕು. ಧಾರ್ಮಿಕ ಭಾವನೆ ಮನಸ್ಸಿನಲ್ಲಿ ನೆಲೆಯೂರಿರಬೇಕು. we should not wear our faiths on our sleeves. ಗಣೇಶನ ಮೂರ್ತಿಗಳನ್ನು ತೋಚಿದ ರೀತಿಯಲ್ಲಿ, ಬ್ಯಾಟ್ ಹಿಡಿದು ಕೊಂಡೂ ಮತ್ಯಾವುದಾದರೂ ರೀತಿಯಲ್ಲಿ ರೂಪಿಸಿದಾಗ ನಾವು ನೀಡುತ್ತಿರುವ ಸಂದೇಶವಾದರೂ ಏನು? ಈ ರೀತಿ ದೇವರ ಚಿತ್ರಗಳನ್ನು, ಇನ್ನಿತರ ಧಾರ್ಮಿಕ ಸಂಕೇತಗಳನ್ನು ಸಾರಾಸಗಟಾಗಿ ಕಲೆಯ ಹೆಸರಿನಲ್ಲಿ ದುರುಪಯೋಗ ಮಾಡಿಕೊಂಡಾಗ ಯಾವುದು ಸರಿ ಯಾವುದು ತಪ್ಪು ಎನ್ನುವ ವಿಂಗಡಿಸುವ ರೇಖೆ ಮಸುಕಾಗಿ ಬಿಡುತ್ತದೆ. ಆಗ ಸಮಸ್ಯೆಗಳು ಎದುರಾಗಲು ತೊಡಗುತ್ತವೆ.

ಮುಸ್ಲಿಮರಲ್ಲಿ ಯಾವುದೇ ಕೆಲಸ ಆರಂಭಿಸುವಾಗಲೂ ಕರುಣಾಮಯನೂ, ದಯಾಮಯನೂ ಆದ ಅಲ್ಲಾಹನ ನಾಮದಿಂದ (ಬಿಸ್ಮಿಲ್ಲಾ ಅರ್ರಹ್ಮಾನ್, ಅರ್ರಹೀಂ) ಎನ್ನುವ ಕುರಾನ್ ಸೂಕ್ತ ಉಪಯೋಗಿಸುತ್ತಾರೆ. ಈ ಸೂಕ್ತವನ್ನು ಕೆಲವರು ಪತ್ರ ಬರೆಯುವಾಗಲೂ ಇನ್ನಿತರ ಸ್ಥಳಗಳಲ್ಲೂ ಬಳಸುವುದನ್ನು ನೋಡಿದ ಧರ್ಮ ಗುರುಗಳು ಆಕ್ಷೇಪ ಮಾಡಿ ನಾವು ಬರೆದ ಕಾಗದ ಅದರ ಉಪಯೋಗ ಮುಗಿದ ನಂತರ ತಿಪ್ಪೆ ಸೇರುವುದರಿಂದ ಅಂಥ ಸ್ಥಳಗಳಲ್ಲಿ ಈ ಸೂಕ್ತ ಉಪಯೋಗಿಸಕೂಡದು ಎಂದು ನಿರ್ದೇಶಿಸಿದ್ದರು. ಹಾಗೆಯೇ ಕೊರಳಿಗೆ ಹಾಕಿ ಕೊಳ್ಳುವ ಸರದ ಲಾಕೆಟ್ ಗಳ ಮೇಲೆ ‘ಅಲ್ಲಾಹ್’ ಎಂದು ಬರೆಯುವುದನ್ನು ಬಹಳ ಜನ ಒಪ್ಪುವುದಿಲ್ಲ. ಏಕೆಂದರೆ ನಮ್ಮೊಂದಿಗೆ ಸರವೂ ಶೌಚ ಗೃಹ ಪ್ರವೇಶ ಮಾಡುವುದರಿಂದ ಅಲ್ಲಾಹನ ಹೆಸರಿನ ಪಾವಿತ್ರ್ಯಕ್ಕೆ ಧಕ್ಕೆ ಆಗಬಹುದು ಎಂದು ಬಗೆದು. ಇದು ಧಾರ್ಮಿಕ ಕುರುಹುಗಳನ್ನು ಕಾಪಾಡುವ ರೀತಿ.

ನಮ್ಮ ಧರ್ಮ ವೈಯಕ್ತಿಕ. ನಮ್ಮ ವೈಯಕ್ತಿಕ ವಿಷಯಗಳಲ್ಲಿ ಕೈ ಹಾಕಲು ಯಾರಿಗೂ ನಾವು ಅನುಮತಿಸುವುದಿಲ್ಲ. ಧರ್ಮಕ್ಕೂ ಅದೇ ನಿಲುವು ಅನ್ವಯವಾಗಲಿ. ಯಾರೂ ಯಾರ ಭಾವನೆಗಳನ್ನೂ ಘಾಸಿಗೊಳಿಸಲು ಹೋಗಬಾರದು. ಎಲ್ಲ ಧರ್ಮಗಳನ್ನೂ ಗೌರವಿಸುತ್ತಾ, ಆದರಿಸುತ್ತಾ ನಡೆದರೆ ಯಾವ ರೀತಿಯ ಸಮಸ್ಯೆಗಳೂ ಎದುರಾಗವು.

ವೇದ ಸುಳ್ಳಾದರೂ…

ವೇದ ಸುಳ್ಳಾದರೂ, ಗಾದೆ ಸುಳ್ಳಾಗದು. ಈ ಕೆಳಗಿನ ಗಾದೆ ಸ್ವಲ್ಪ ವಿಚಿತ್ರವಾಗಿದೆ, tread carefully.

“A man who likes a lot of salt in his food is very much in love with his wife.” – Albanian saying.  

ಮೇಲಿನದು ಅಲ್ಬೇನಿಯಾ ದೇಶದ ಗಾದೆ. ತನ್ನ ಆಹಾರದಲ್ಲಿ ಹೆಚ್ಚು ಉಪ್ಪನ್ನು ಬಯಸುವವನು ತನ್ನ ಹೆಂಡತಿಯಲ್ಲಿ ಹೆಚ್ಚು ಅನುರಕ್ತನಾಗಿರುವನು.

ತಾಯಿಗಿಂತ ಬಂಧುವಿಲ್ಲ ಉಪ್ಪಿಗಿಂತ ರುಚಿಯಿಲ್ಲ ಎನ್ನುವ ಗಾದೆ ನಮ್ಮಲ್ಲಿ ಪ್ರಚಲಿತವಿದ್ದರೆ ಅಲ್ಬೇನಿಯಾದ ಗಾದೆ ಅರ್ಧಾಂಗಿನಿಯ ಕಡೆ ವಾಲುವಂಥದ್ದು. ಅದರಲ್ಲೇನು ತಪ್ಪು ತಕ್ಕಳಿ, ನಮಗೆ ‘ಅಮ್ಮ’ ಪ್ರಯಾರಿಟಿ, ಅವರಿಗೆ ‘ಅಮ್ಮಾವ್ರು’ ಪ್ರಯಾರಿಟಿ ಅಷ್ಟೇ.

ವಿ. ಸೂ:  ಮಡದಿಯನ್ನು ಇಂಪ್ರೆಸ್ ಮಾಡಲೆಂದು ಉಪ್ಪು ಜಾಸ್ತಿ ಹಾಕಿಸಿಕೊಂಡು ಬಿ. ಪಿ. ಯನ್ನು ತಾರಕಕ್ಕೇರಿಸಿ ಕೊಂಡೆ ಎಂದು ಮಾತ್ರ ನನ್ನನ್ನು ಹಳಿಯಬೇಡಿ.

“ಪಂಚ ಕನ್ಯೆ” ಯರ ವಿದಾಯ

“ಪಂಚ ಕನ್ಯೆ” ಯರ ವಿದಾಯ ಪರಂಪರೆ ಮುಕ್ತಾಯ, ನೇಪಾಳದಲ್ಲಿ.  ಪಂಚ ಕನ್ಯೆಯರು ಎಂದ ಕೂಡಲೇ ಆರತಿ, ಭಾರತಿ, ಮಂಜುಳ, ಕಲ್ಪನ, ಚಂದ್ರಕಲಾ…. ಇವರೇ ನಮ್ಮ ಕನ್ನಡ ನಾಡಿನ ಪಂಚ ಕನ್ನೆಯರೂ……ಎನ್ನೋ ಹಾಡು ನೆನಪಿಗೆ ಬಂದಿರಬೇಕು ಆಲ್ವಾ? ಬಿಟ್ಹಾಕಿ, ಇದು ಆ ಗತಕಾಲದ ನಮ್ಮೆಲ್ಲರ ಮನ ರಂಜಿಸಿದ ಕನ್ನೆಯರ ಕಥೆಯಲ್ಲ, ನಮ್ಮ ದೇಶದ ಉತ್ತರದ ಗಡಿಯಾಚೆಗಿನ ನೇಪಾಳದ ಕನ್ನೆಯರ ವ್ಯಥೆಯ ಕಥೆಯಿದು.

ನೇಪಾಳದ ರಾಷ್ಟ್ರ ನಾಯಕ ಹೊರದೇಶದ ಪ್ರವಾಸ ಹೊರಟಾಗ ಅವರನ್ನು ಬೀಳ್ಕೊಡಲು ಐದು ಕನ್ಯೆಯರನ್ನು ಸಿದ್ಧ ಪಡಿಸಲಾಗುತ್ತಿತ್ತಂತೆ. ದುರ್ಗ, ಸರಸ್ವತಿ, ಲಕ್ಷ್ಮಿ, ರಾಧ, ಅನ್ನಪೂರ್ಣ ಎನ್ನುವ ಯಶಸ್ಸನ್ನು ತರುವ ಈ ದೇವತೆಗಳನ್ನು ಪ್ರತಿನಿಧಿಸುವ ಪಂಚ ಕನ್ಯೆಯರು ಪ್ರವಾಸ ಹೋಗುವ ನಾಯಕನಿಗೆ ಶುಭವಾಗಲು ಮತ್ತು ಸಂಪತ್ತು ಸಿಗಲೆಂದು ಹಾರೈಸಿ ಈ ವ್ಯವಸ್ಥೆ ಮಾಡುತ್ತಿದ್ದರಂತೆ. ಶಾಲೆಗೆ ಹೋಗುವ ಈ ಹೆಣ್ಣು ಮಕ್ಕಳು ಸುಡು ಬಿಸಿಲಿನಲ್ಲಿ ಬೆವರು ಸುರಿಸುತ್ತಾ ನಿಂತು ಅವರಿಗೆ ಶುಭ ಕೋರುವುದನ್ನು ಕಂಡು ಮರುಗಿದ ಅಧ್ಯಕ್ಷರು ಈ ಪರಂಪರೆಗೆ ಮಂಗಳ ಹಾಡಲು ತೀರ್ಮಾನಿಸಿದರಂತೆ.

ಶತಮಾನಗಳಿಂದ ನಡೆದು ಕೊಂಡು ಬರುತ್ತಿದ್ದ ಈ five virgin farewell ಸಮಾರೋಹದ ಪರಂಪರೆಗೆ ನೇಪಾಳದ ಅಧ್ಯಕ್ಷರು ಕೊನೆಗೂ good bye, good riddance ಹೇಳಿ ಸುಡು ಬಿಸಿಲಿನ ಬೇಗೆಯಿಂದ ಕನ್ನೆಯರ ಬಿಡುಗಡೆಗೆ ನಾಂದಿ ಹಾಡಿದರು.

ಒಂದು ಬಾಷ್ಪಾಂಜಲಿ, ಶಾಂತಿ ದೂತನಿಗೆ

ಬ್ರಿಟನ್ ಮೂಲದ ಶಾಂತಿ ದೂತ ಬ್ರಯಾನ್ ಹಾವ್ ಇನ್ನಿಲ್ಲ. ಎರಡು ವರ್ಷಗಳ ಹಿಂದೆ ಬ್ರಯನ್ ಹಾವ್ ನನ್ನು ‘ಬ್ರಿಟಿಷ್ ಏಕಲವ್ಯ’ ಎನ್ನುವ ಶೀರ್ಷಿಕೆಯಡಿ ಒಂದು ಲೇಖನ ಬರೆದು ನನ್ನ ‘ಹಳೇ ಸೆತುವೆ’ ಬ್ಲಾಗ್ ನಲ್ಲಿ ಪ್ರಕಟಿಸಿದ್ದೆ. ದುರ್ದೈವ, ಈಗ ಅವನಿಗೆ ಶ್ರದ್ಧಾಂಜಲಿ ಹೇಳುವ ಸಮಯ.

ಬ್ರಿಟಿಷ್ ಸಂಸತ್ ಭವನದ ಎದುರು ಚಳಿ ಮಳೆಗೆ ಮೈಯ್ಯೊಡ್ಡಿ ಡೇರೆ ಯೊಳಗೆ ಬದುಕುತ್ತಾ ಆಫ್ಘನ್ ಗುಡ್ಡ ಗಾಡಿನ ಲ್ಲಿ ಮತ್ತು ಇರಾಕ್ ನಲ್ಲಿ ನಡೆದ ಮಾರಣ ಹೋಮ ದ ಬಗ್ಗೆ ವಿಶ್ವದ ಗಮನ ಸೆಳೆಯಲು ಪ್ರಯತ್ನ ಪಡುತ್ತಿದ್ದ ಧ್ವನಿ ನಿಸ್ತೇಜ ಈತನ ಸಾವಿನೊಂದಿಗೆ. ರಾಜಕಾರಣಿಗಳ ಬೆದರಿಕೆಗೆ, ಪೊಲೀಸರ ದಬ್ಬಾಳಿಕೆಗೆ ಸಡ್ಡು ಹೊಡೆದು ನಿಂತಿದ್ದ ಹಾವ್ ಕೊನೆಗೆ ಶ್ವಾಸಕೋಶದ ಕ್ಯಾನ್ಸರ್ ರೋಗಕ್ಕೆ ಶರಣಾದ ಈ ತಿಂಗಳ ೧೮ ರಂದು. ಈತನ ಸಾವಿನೊಂದಿಗೆ ಬುಶ್ ಮತ್ತು ಬ್ಲೇರ್ ರಂಥ ಯುದ್ಧ ಕೋರರಿಗೆ ಒಸಾಮಾ ಸಾವಿನಿಂದಿಂದ ಸಿಕ್ಕ ‘closure’ ಭಾವ ಅಥವಾ ನಿರಾಳ ಭಾವ ಸಿಕ್ಕಿರಬಹುದು. ಲಂಚ ಸಮಾಜದ ಅವಿಭಾಜ್ಯ ಅಂಗ ಮಾತ್ರವಲ್ಲ ಅದೊಂದು ಮಾಮೂಲು ಧಂಧೆ ಎನ್ನುವ ಮಟ್ಟಕ್ಕೆ ಬಂದಾಗ ಅದರ ವಿರುದ್ಧ ಸೊಲ್ಲೆತ್ತಿದ ಸಿರಿವಂತ ಸಾಧು ರಾಮ್ ದೇವ್ ಮತ್ತು ಸಮಾಜ ಸೇವಕ ಅಣ್ಣಾ ಹಜಾರೆ ರಾಜಕಾರಣಿಗಳ ಕೆಂಗಣ್ಣಿಗೆ ಗುರಿಯಾದಂತೆಯೇ ಈತನೂ ಸಹ ತೀವ್ರ ವಿರೋಧವನ್ನು ಎದುರಿಸಬೇಕಾಯಿತು. ಬ್ರಯನ್ ಕೆಚ್ಚೆದೆಯ ವ್ಯಕ್ತಿ. ನಾವೆಂದೂ ಮಾಡಲಾಗದ, ಕೆಲಸವನ್ನೂ ಆತ ಮಾಡಿ ತೋರಿಸಿದ. ಸರಕಾರದಿಂದ, ವ್ಯವಸ್ಥೆಯಿಂದ ಪ್ರತಿರೋಧ ಎದುರಾದಾಗ ವೇಷ ಬದಲಿಸಿಕೊಂಡು ಕಾಲಿಗೆ ಬುದ್ಧಿ ಹೇಳುವ ಯತ್ನ ಮಾಡಲಿಲ್ಲ.

ಶಾಂತಿಯ ಪರಂಪರೆ ಹುಟ್ಟು ಹಾಕಿದ ಬ್ರಯನ್ ನಮಗೆಲ್ಲರಿಗೂ ಒಂದು ಪಾಠ. ಉರಿ ಬಿಸಿಲಿನಲ್ಲಿ ಒಂದು ಘಂಟೆ ನಿಂತು ವ್ಯವಸ್ಥೆಯ ವಿರುದ್ಧ ಪ್ರತಿಭಟಿಸದ ನಾವು ಬ್ರಯನ್ ರೀತಿ ಹಗಲು ರಾತ್ರಿ ಪೂರ್ತಿ ಹತ್ತು ವರ್ಷಗಳ ಕಾಲ ಒಂದು ಕಡೆ ಡೇರೆ ಬಿಗಿದು ಕೂರಲು ಸಾಧ್ಯವೇ? ಅದರ ಮೇಲೆ ರಾಜಕಾರಣಿಗಳ ಕಟು ಟೀಕೆ. ಪೊಲೀಸರ ನಿರಂತರ ಒತ್ತಡ, ಡೇರೆ ಖಾಲಿ ಮಾಡಲು. ಒಮ್ಮೆ ಪೊಲೀಸರು ಬಂದು ಅವನು ಡೇರೆ ಹೊರಗೆ ಅಂಟಿಸಿದ್ದ ಕೈಬರಹದ ಪೋಸ್ಟರ್ ಗಳನ್ನು ಕಿತ್ತು ಹಾಕಿದ್ದರು. ಮರು ದಿನ ಶ್ರದ್ಧೆಯಿಂದ ಮತ್ತೆ ತಾನು ಬರೆಯಬೇಕಾದುದನ್ನು ಬರೆದು ನೇತು ಹಾಕಿದ ತಾನೇ ಬೀಡು ಬಿಟ್ಟಿದ್ದ ಠಿಕಾಣಿ ಹೊರಗೆ. ಈತನನ್ನು ಕೆಲವರು, ಧೀಮಂತ, ಶಾಂತಿ ದೂತ ಎಂದು ಕೊಂಡಾಡಿದರೆ ರಾಜಕಾರಣಿಗಳಿಗೆ ಈತ ಒಂದು nuisance. ಸಂಸತ್ ಭವನದ ಘನತೆಯನ್ನು ಗೌರವವನ್ನೂ ತನ್ನ ಭಿತ್ತಿ ಪತ್ರಗಳಿಂದ, ಬಾವುಟ, banner, placard, poster, teddy bears ಗಳಿಂದ ಹಾಳುಗೆಡವುತ್ತಿದ್ದಾನೆ ಎಂದು ದೂರು. ಈತ ಹಾಕಿದ್ದ ಡೇರೆ ಮತ್ತು ಅದರ ಸುತ್ತ ಮುತ್ತ ಅಂಟಿಸಿದ್ದ ಮುಗ್ಧ ಮಕ್ಕಳ, ಸ್ತ್ರೀಯರ ರೋದನದ ಚಿತ್ರಗಳು, ಭಿತ್ತಿ ಪತ್ರಗಳು ಸಂಸತ್ ವಲಯವನ್ನು ಕೊಳೆ ಗೇರಿಯಾಗಿ ಪರಿವರ್ತಿಸಿವೆ ಎಂದು ದೂರಿದ ರಾಜಕಾರಣಿಗೆ ಈ ವಿಷಯ ಹೊಳೆಯದೆ ಹೋಯಿತು ಸುಳ್ಳುಗಳನ್ನು ಹೆಣೆದು, ದಾಖಲೆಗಳನ್ನು ತಮಗೆ ಬೇಕಾದ ರೀತಿಯಲ್ಲಿ ತಿರುಚಿ, ಕಾಲು ಕೆರೆದು ಯುದ್ಧಕ್ಕೆ ಹೋಗೋದು ಕೊಳೆಗೇರಿ ಎಬ್ಬಿಸುವುದಕ್ಕಿಂತ ಗಬ್ಬು ಕೆಲಸ ಎಂದು.

ಬ್ರಯನ್ ಹೀಗೆ ಹಗಲು ರಾತ್ರಿ ಎನ್ನದೆ ತನ್ನ ಕೌಟುಂಬಿಕ ಬದುಕನ್ನು ಬಿಟ್ಟು ವಿಶ್ವದ ಯಾವ್ಯಾವುದೋ ಮೂಲೆಯಲ್ಲಿ ನೆಲೆಸುವ ಜನರ ಮೇಲೆ ಈತನಿಗಿರುವ ಮರುಕ, ಕಾಳಜಿಗೆ ಆಸಕ್ತರಾಗಿ ಈತನೊಂದಿಗೆ ಮಾತಿಗೆ ನಿಲ್ಲುವವರ ಮೇಲೂ ಕೆಲವು ಜನರು ಹರಿಹಾಯ್ದಿದ್ದಿದೆ. ಈ ಜನ ಎಂಥವರೆಂದರೆ ಸರಕಾರ ಮಾಡುವುದು ತಪ್ಪು ಎಂದು ತೋರಿದರೂ ಪ್ರತಿಭಟಿಸಲು ಅವರಲ್ಲಿ ಬೇಕಾದ ಕಸುವು ಇರುವುದಿಲ್ಲ, ಅಥವಾ ವೇಳೆ ಇರೋಲ್ಲ. ಬೇರೆಯವ ಈ ಕಾರ್ಯವನ್ನ ಕೈಗೆತ್ತಿಕೊಂಡಾಗ ಭೀತಿ ಆವರಿಸಿಕೊಳ್ಳುತ್ತದೆ. ಆಗ ಬೈಗುಳಗಳ ಸುರಿಮಳೆ. ಸರಕಾರದ ಪರ ವಕಾಲತ್ತು. ಇಂಥ ಜನರ ಅಲ್ಪತನದಿಂದ ಈತ ಇನ್ನಷ್ಟು ಎತ್ತರಕ್ಕೆ ಬೆಳೆದನೆ ಹೊರತು ಈತನ ಕೆಚ್ಚನ್ನು ಕುಗ್ಗಿಸಲಿಲ್ಲ. ಕಟು ಮಾತುಗಳು. ಲಂಡನ್ನಿಗೆ ಬರುವ ಪ್ರವಾಸಿಗರಿಗೆ ಈತನ ಡೇರೆ ಒಂದು ಪ್ರಮುಖ ಆಕರ್ಷಣೆಯಾಗಿತ್ತು.

ಹೀಗೆ ಹೊರಗಿನವರ, ಸಂಘಟನೆಗಳ ವಶೀಲಿ ಬಾಜೀ ಇಲ್ಲದೆ ತೆರನಾದ ಸವಾಲುಗಳಿಗೆ ಧೃತಿಗೆಡದೆ ಸ್ಥೈರ್ಯದಿಂದ ತಾವು ನಂಬಿದ ಮೌಲ್ಯಗಳಿಗಾಗಿ ತಮ್ಮ ಬದುಕನ್ನು ಮುಡಿಪಾಗಿಡುವ ಸಾಧಕರು ಅಲ್ಲಲ್ಲಿ ಕಾಣಲು ಸಿಗುತ್ತಾರೆ. ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ವ್ಯವಸ್ಥೆಯ ವಿರುದ್ಧ ಹೋರಾಡಿದ ನಮ್ಮವರೇ ಆದ ವ್ಯಕ್ತಿಯೊಬ್ಬರ ಉದಾಹರಣೆ ಇದೆ. ಅವರೇ ‘ಹೊಟ್ಟೆ ಪಕ್ಷ’ ದ ರಂಗ ಸ್ವಾಮಿ.

ಅತ್ಯಧಿಕ ಬಾರಿ ಚುನಾವಣೆಗಳಲ್ಲಿ ಸ್ಪರ್ಧಿಸಿ ಉಂಡದ್ದು ಸೋಲನ್ನೇ ಆದರೂ ಬಡವರಿಗೆ ಕಿಲೋ ಗ್ರಾಂ ಗೆ ಒಂದು ರೂಪಾಯಿ ಅಕ್ಕಿ ಕೊಡುವ ವಾಗ್ದಾನ ದ ಮೂಲಕ ಚುನಾವಣೆಗಳನ್ನು ಸೆಣಸುತ್ತಿದ್ದರು ಹೊಟ್ಟೆ ಪಕ್ಷದ ರಂಗ ಸ್ವಾಮಿ. ಚಿಕ್ಕಮಗಳೂರಿನಲ್ಲಿ ಇಂದಿರಾ ವಿರುದ್ಧವೂ ಸ್ಪರ್ದಿಸಿದ್ದ ರಂಗ ಸ್ವಾಮೀ ಬಹುಶಃ ತಾವು ಗೆಲ್ಲುವುದಿಲ್ಲ ಎನ್ನುವ ಸ್ಪಷ್ಟ ಅರಿವಿದ್ದೂ ಚುನಾವಣೆಯಲ್ಲಿ ಸ್ಪರ್ದೆಗೆ ಮುಂದಾಗುತ್ತಿದ್ದದ್ದು ಒಪ್ಪೊತ್ತಿನ ಅನ್ನಕ್ಕಾಗಿ ಬಡವರು ಪಡುವ ಬವಣೆ ಬಗ್ಗೆ ರಾಜಕಾರಣಿಗಳ ಮನ ಸೆಳೆಯುವ ಉದ್ದೇಶವೂ ಆಗಿರಬಹುದು. ಚುನಾವಣೆ ಪ್ರಚಾರಕ್ಕೆ ಇವರು ಬಂದಾಗ ಸೋಲುವುದು ಗ್ಯಾರಂಟಿಯಾದರೂ ಯಾಕಾದರೂ ಈತ ನಿಲ್ಲುತ್ತಾರೋ ಎಂದು ಜನ ಕನಿಕರ ಮತ್ತು ಅಪಹಾಸ್ಯದಿಂದ ಮಾತಾಡಿದರೆ ಇವರಿಗೆ ಅದರ ಪರಿವೆಯಿಲ್ಲ. ರಂಗ ಸ್ವಾಮೀ ನಿಧನರಾಗಿ ನಾಲ್ಕು ವರ್ಷಗಳಾ ದುವಂತೆ. ಆದರೆ ನನಗೆ ತಿಳಿದಿದ್ದು ಬ್ರಯನ್ ಹಾವ್ ತೀರಿ ಹೋದ ದಿನ.

ಒಂದು ಕಡೆ ಬುಶ್ ಮತ್ತು ಬ್ಲೇರ್ ರ ಸುಳ್ಳಿನಿಂದ ಪ್ರೇರಿತವಾದ ಸೈನ್ಯಗಳು ದಿನದ ೨೪ ಘಂಟೆಗಳ ಕಾಲ ನಿರಂತರ ಇರಾಕ್ ಆಫ್ಘಾನಿಸ್ತಾನ, ಮುಂತಾದ ದೇಶಗಳ ಮೇಲೆ ಬಾಂಬುಗಳ ಮಳೆಗರೆಯುತ್ತಿದ್ದರೆ ಈ ಕೃತ್ಯಗಳ ವಿರುದ್ಧ ಈತ ಪ್ರತಿರೋಧ ನಡೆಸಿದ ೧೦ ವರ್ಷ ಪೂರ್ತಿ. ಕ್ಯಾನ್ಸರ್ ರೋಗದ ಚಿಕಿತ್ಸೆಗೆಂದು ಜರ್ಮನಿ ದೇಶಕ್ಕೆ ಹೋದ ಬ್ರಯನ್ ಮರಳಿ ಬರದೆ ಡೇರೆ ಖಾಲಿಯಾಯಿತೆ ವಿನಃ ಅವನನ್ನು ಹೊರಹಾಕಲು ಬ್ರಿಟಿಶ್ ಸರಕಾರ ನಡೆಸಿದ ಎಲ್ಲ ಪ್ರಯತ್ನಗಳೂ (ನಮ್ಮ ದೇಶದ UPA ಸರಕಾರಕ್ಕೆ ಈತನ ಡೇರೆ ಖಾಲಿ ಮಾಡಿಸುವ ಕೆಲಸದ ಗುತ್ತಿಗೆ ನೀಡಿದ್ದರೆ ಏನಾಗುತ್ತಿತ್ತೋ ಊಹಿಸಿ) ವಿಫಲವಾದವು. ಪ್ರಶಸ್ತಿ ಪುರಸ್ಕಾರಗಳ ಅಪೇಕ್ಷಿಯಿಲ್ಲದೆ ‘ಮೆಗಾ ಫೋನ್’ ಹಿಡಿದು ತನ್ನ ಕಸುಬನ್ನು ಅತೀ ಶ್ರದ್ಧೆಯಿಂದ ಮಾಡುತ್ತಿದ್ದ ಈ ‘ಬಡಗಿ’ ಗೆ ೨೦೦೭ ರಲ್ಲಿ ‘ಚಾನಲ್ ೪’ ಟೀವೀ ಸಂಸ್ಥೆ ‘ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿ’ ಎಂದು ಅವನನ್ನು ಆಯ್ಕೆ ಮಾಡಿದಾಗ ಹಿಗ್ಗಿದ ಬ್ರಯನ್ ತನಗೆ ಟೋನಿ ಬ್ಲೇರ್ ಮತ್ತು ಡೇವಿಡ್ ಕೆಮರೂನ್ ರಿಗಿಂತ ಹೆಚ್ಚು ಮತ ನೀಡಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದ ಹರ್ಷದಿಂದ ಅಭಿನಂದನೆ ಸಲ್ಲಿಸಿದ. ಯುದ್ಧ ಕೋರ ನಾಯಕರ ಕೃತ್ಯಗಳ ಕಾರಣ ನೋವನ್ನನುಭವಿಸುವ ಜನರಿಗಾಗಿ ಏಕಾಂಗಿಯಾಗಿ ಹೋರಾಡಿದ ಬ್ರಯನ್ ವೈಯಕ್ತಿಕ ಜೀವನದಲ್ಲಿ ನೋವನ್ನೂ, ಹಿನ್ನಡೆಯನ್ನೂ ಕಂಡ. ೨೦೦೧ ರಲ್ಲಿ ಈ ಅಪರೂಪದ ವಿಶಿಷ್ಟ ರೀತಿಯ ಪ್ರತಿಭಟನೆಯನ್ನು ಆರಂಬಿಸಿದ ಒಂದು ವರ್ಷದ ಒಳಗೆ ಈತನ ಪತ್ನಿ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದಳು. ವಿಚಲಿತನಾಗದ ಬ್ರಯನ್ ಹೇಳಿದ್ದು ನಾನು ನನ್ನ ಪತ್ನಿ ಮತ್ತು ಮಕ್ಕಳನ್ನು ತುಂಬಾ ಪ್ರೀತಿಸುತ್ತೇನೆ, ಅವರು ದೂರವಾಗುವಂತೆ ಮಾಡಿದ್ದೂ ದುರುಳ ನಾಯಕರೆ ಎಂದು ಹಲುಬುತ್ತಾನೆ.

ಬ್ರಯನ್ ಗೆ ಏಳು ಜನ ಮಕ್ಕಳಿದ್ದರು.

ಹೊಗೆಯಾಗಿ ಹೋಗಲಿರುವ ಮತ್ತೊಂದು ದಿನ…

…”ವಿಶ್ವ ತಂಬಾಕು ರಹಿತ” ದಿನ.

ಶಾಸನ ವಿಧಿಸಿದ ಎಚ್ಚರಿಕೆ: ಧೂಮಪಾನ ಆರೋಗ್ಯಕ್ಕೆ ಹಾನಿಕರ. ಈ ಮಾತುಗಳು ಶಾಸನಗಳಷ್ಟೇ ವ್ಯರ್ಥ, ಕೆಲಸಕ್ಕೆ ಬಾರದಂಥವು. ಜೀವಗಳನ್ನು ರಕ್ಷಿಸಲೆಂದು ಸೃಷ್ಟಿಸಿದ ನಿರ್ಜೀವ ಸಂದೇಶ. ಈ ಸಂದೇಶ ನೋಡಿ ಯಾವನೂ ಸಿಗರೇಟ್, ಬೀಡಿ ಸಹವಾಸ ಬೇಡ ಎಂದು ಹೇಳಿದ್ದನ್ನು ನಾನಂತೂ ಕೇಳಿಲ್ಲ. ಧೂಮಪಾನ ಮಾಡಬಾರದು ಎಂದು ಬಾಲ್ಯದಲ್ಲಿ ಪಾಲಕರೂ, ಯೌವನದಲ್ಲಿ ಅರ್ಧಾಂಗಿನಿಯರೂ ಹೇಳುವುದನ್ನು ಕವಡೆ ಕಾಸಿಗೆ ಬೆಲೆ ಕಲ್ಪಿಸದೆ ಸೇದುವವರ ಸಂಖ್ಯೆಯೇ ಅಧಿಕ. ಇನ್ನು ಈ ನಡವಳಿಕೆಯಲ್ಲಿ ಏನಾದರೂ ಪರಿವರ್ತನೆ ಬರಬೇಕೆಂದರೆ ಡಿಸೆಂಬರ್ ೩೧ ಅಥವಾ ಜನವರಿ ೧, ಹೊಸವರ್ಷದ ನಿರ್ಣಯವಾಗಿ ಆಶ್ವಾಸನೆ, ನಾನಿನ್ನು ಸಿಗರೇಟ್ ಸೇದೊದಿಲ್ಲ ಎಂದು. ಈ ನಿರ್ಣಯದ ಆಯುಷ್ಯ ಹೆಚ್ಚು ಎಂದರೆ ೭೨ ಘಂಟೆಗಳು. ಮೂರು ದಿನ.     

Smokers are beggars ಅಂತಾರೆ. ಒಂದು ‘ಕಡ್ಡಿ’ ಇದ್ಯೇನಣ್ಣ? lighter please.. ಪರಿಚಯದ ಅವಶ್ಯಕತೆಯಿಲ್ಲ, instant beggars. ಅವರುಗಳ ನಡುವಿನ camaraderi ಅಂಥದ್ದು. ಸ್ಮೋಕರ್ ಗಳು humble ಅಂತೆ, ಏಕೆಂದರೆ ಅವರು ಸ್ಮೋಕಿಸಲೆಂದು ಬೀಡಿ ಸಿಗರೇಟಿಗೆ ಕಿಡಿ ಹೊತ್ತಿಸುವಾಗ ಸ್ವಲ್ಪ ನಾಜೂಕಾಗಿ ಬಗ್ಗಿ ತಾನೇ ಹಚ್ಚೋದು? ಹಾಗೆಯೇ ಒಂದು “ಕಡ್ಡಿ” ಕೊಡಣ್ಣ ಎಂದು ಗಿಂಜುತ್ತಾ ಕೇಳುವುದರಲ್ಲೂ ತುಂಬಿದೆ “ಹಂಬಲ್” ನೆಸ್, ಅಲ್ವೇ?

 ಧೂಮಪಾನಿಗಳು ಯಾವುದೇ ವಿಷಯದಲ್ಲೂ ಕಂಜೂಸ್ ಗಳಾದರೂ ತಮ್ಮ ಪ್ರೀತಿಯ ಧೂಮಪಾನದ ಖರ್ಜಿಗೆ ಮಾತ್ರ ಹಿಂದೆ ಮುಂದೆ ನೋಡರು. ಚಟವೇ ಹಾಗೆ ನೋಡಿ. ಮೊದಲು ತಮಾಷೆಗೆ, ಮೋಜಿಗೆ ಎಂದು ಆರಂಭವಾದ ಚಟ ನಮ್ಮನ್ನು ಗುಲಾಮರನ್ನಾಗಿಸುತ್ತದೆ. ಕೆಲವೊಮ್ಮೆ ಈ ಚಟ ಬಹುಬೇಗನೆ ಚಟ್ಟ ಏರಲೂ ನೆರವಾಗುತ್ತದೆ. ಅನೇಕ ರೀತಿಯ ಕ್ಯಾನ್ಸರ್ ಗಳಿಗೆ ಕಾರಣ ಧೂಮಪಾನ. ಧೂಮಪಾನ ಯಾವಾಗ ಬಿಡ್ತೀಯ ಎಂದು ಅವಿವಾಹಿತನನ್ನು ಕೇಳಿದರೆ ತನ್ನ ತುಟಿಗಳಿಗೆ ಪರ್ಯಾಯವಾದದ್ದು ಸಿಕ್ಕ ನಂತರ ಎನ್ನುತ್ತಾನೆ. ಅಂದ್ರೆ ಅವನಿಗೊಂದು ಚೆಂದುಳ್ಳಿ ಹೆಣ್ಣನ್ನು ಹೊಂದಿಸಿ ಕೊಟ್ಟ ಕೂಡಲೇ ತನ್ನ ಚಟವನ್ನು ಬಿಡುತ್ತಾನೆ ಎನ್ನುವ ಖಾತರಿಯಿಲ್ಲ. “ಪರ್ಯಾಯ” ವಾಗಿ ಸಿಕ್ಕಿದ್ದು boredom ಆಗಿ ಕಾಣುತ್ತಿದ್ದಂತೆಯೇ ವಾಪಸ್ ಹಳೇ ಧಂಧೆಗೆ.  

ಸಿಗರೇಟ್ ಸೇದುವವರ ಮಧ್ಯೆ ಸಿಕ್ಕಿ ಕೊಂಡ ನಮ್ಮ ಪಾಡು ಸ್ವಲ್ಪ ನೋಡಿ. ಸೇದುವವನೇನೋ ಸುಖವಾಗಿ, ತನ್ನ ಚಟದ ಮಜಾ ತೆಗೆದು ಕೊಳ್ಳುತ್ತಾ, ಸುರುಳಿಯಾಗಿಯೂ, ಕೊಳವೆಯಾಗಿಯೂ, ತರಾವರಿ ರೀತಿಯ ಹೊಗೆಯನ್ನು ಬಿಡುತ್ತಾ, ಹೊಗೆ ಬಿಡುವ ತನ್ನ creativity ಗೆ ತನಗೆ ತಾನೇ ತಲೆದೂಗುತ್ತಾ ಮತ್ತಿನಲ್ಲಿರುತ್ತಾನೆ. ಆದರೆ ನಾವು? ನಮಗೇನು ಸಿಗುತ್ತದೆ ಅದರಿಂದ ಆನಂದ? ಅವನ ಸಿಗರೇಟ್ ನ ತುದಿಯಿಂದ ಹೊರ ಬರುವ ಹೊಗೆ, ಅವನ ಬಾಯಿಂದ ಬರುವ ಹೊಗೆ, ಅವನ ಮೂಗಿನಿಂದ ಬರುವ ಹೊಗೆ, ಅವನ ಕವಿ ಕಣ್ಣುಗಳಿಂದ ಬರುವ ಹೊಗೆ, ಹೀಗೆ ನಾನಾ ರೀತಿಯಲ್ಲಿ, ಅವನ ಶರೀರದ ಎಲ್ಲಾ ರಂಧ್ರಗಳಿಂದಲೂ ‘ಫಿಲ್ಟರ್’ ಆಗಿ ಬರುವ ಹೊಗೆಯನ್ನು ನಾವು ಸೇವಿಸಬೇಕು. ಪ್ರತಿಭಟಿಸಿದಿರೋ, ಮೇಲೆ ಹೇಳಿದ ಹಂಬಲ್ ನೆಸ್ ಎಲ್ಲಾ ಮಾಯಾ. ನಿಮ್ಮ ಕಡೆ ಕೆಕ್ಕರಿಸಿ ಒಂದು ನೋಟ, ದಮ್ಮು ಸೇರಿಸಿ ಜೋರಾಗಿ ಮತ್ತೊಂದು ದಮ್ಮು. ಹೀಗೆ ಸಿಗರೆಟ್ ಸೇದದೆಯೂ ಅದರ ಎಲ್ಲಾ ಬ್ಯಾನೆಗಳನ್ನು ಅಂಟಿಸಿ ಕೊಳ್ಳುವ ಸೆಕೆಂಡರಿ ಸ್ಮೋಕರ್ ಗಳಾದ ನಮಗೆ ಯಾವ ರಕ್ಷಣೆಯೂ ಇಲ್ಲ. secondary smoking, ವೈದ್ಯಕೀಯ ಅಧ್ಯಯನದ ಪ್ರಕಾರ, active smoking ಗಿಂತ ಅಪಾಯಕಾರಿ ಅಂತೆ. ಕೆಲವು ವರ್ಷಗಳ ಹಿಂದೆ ಹೀಗೆ ಸೆಕೆಂಡರಿ ಸ್ಮೋಕಿಂಗ್ ಕಾರಣ ಕ್ಯಾನ್ಸರ್ ತಗುಲಿಸಿಕೊಂಡ ಕೊಂಡ ಓರ್ವ ಪಾಶ್ಚಾತ್ಯ ಮಹಿಳೆ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಳು ಪರಿಹಾರ ಕೇಳಿ ಎಂದು ಓದಿದ ನೆನಪು. ಪರಿಹಾರ ಸಿಕ್ಕಿತೋ ಇಲ್ವೋ ಗೊತ್ತಿಲ್ಲ. ‘ಫಿಲಿಪ್ ಮೋರಿಸ್’ ನಂಥ ಕಂಪೆನಿಗಳಿಂದ ಹಣ ಕೇಳೋದು ಒಂದೇ, ಹೋದ ಪ್ರಾಣ ವಾಪಸ್ಸು ಕೊಡು ಎಂದು ಯಮನ ಹಿಂದೆ ಬೀಳೋದು ಒಂದೇ.

ಮುಂದುವರಿದ ದೇಶಗಳಲ್ಲಿ ಧೂಮಪಾನಿಗಳಿಗೆ ಎಲ್ಲೂ ಧೂಮಪಾನ ಮಾಡಲು ಸ್ಥಳವಿಲ್ಲದಂತೆ ಮಾಡಿದ್ದಾರೆ, ಅಷ್ಟು ಮಾತ್ರವಲ್ಲ ಅದರ ಮೇಲೆ ಜನ ಜಾಗೃತಿ, ಅಭಿಯಾನ ಬೇರೆ. ಹಾಗಾದರೆ ಮುಂದುವರಿದ ದೇಶಗಳಲ್ಲೇ ಹುಟ್ಟಿದ, ಅವರೇ ನಡೆಸುವ ಸಿಗರೆಟ್ ಕಂಪೆನಿಗಳ ಕಥೆ ? ಅಲ್ಲಿನ ಜನರು ಧೂಮಪಾನ ಕಂಪೆನಿಗಳನ್ನು “ಮುಂದಕ್ಕೆ ಹೋಗಪ್ಪಾ” ಎಂದು ಅಟ್ಟಿದರೆ, ಇವರುಗಳು ಮುಂದು ಮುಂದಕ್ಕೆ ಬಂದು ಇನ್ನೂ ಅಭಿವೃದ್ಧಿ ಹೊಂದುತ್ತಿರುವ, ಹೊಂದದ ದೇಶಗಳಿಗೆ ತಮ್ಮ ಸರಕುಗಳನ್ನು ಇಳಿಸಿದರು. ಸುಲಭ ಬೆಲೆಗೆ ಮಾರಲು ಶುರು ಮಾಡಿದರು. ಇಲ್ಲಿ ಸೌದಿ ಅರೇಬಿಯಾದಲ್ಲಿ ಯುವಜನರ ಫೇವರಿಟ್ ಆದ marlboro ಸಿಗರೇಟ್  ಒಂದು ಪ್ಯಾಕ್ ಗೆ ೫.೫೦ ರಿಯಾಲ್  ( ೭೦.೦೦ ರೂ) ಆದರೆ marlboro ಕಂಪೆನಿಯ ತವರೂರು ಅಮೆರಿಕೆಯಲ್ಲಿ ಈ ಸಿಗರೆಟ್ ಗೆ ಬೆಲೆ ನಾಲ್ಕು ಪಟ್ಟು ಹೆಚ್ಚು. ಸೇದಬಾರದು ಎಂದು ಎಟುಕದ ಬೆಲೆ. ನೋಡಿ, ಸ್ವದೇಶೀಯರನ್ನು ಎಷ್ಟು ಚೊಕ್ಕವಾಗಿ ಇಟ್ಟುಕೊಳ್ಳುತ್ತಾರೆ ಅಮೆರಿಕನ್ನರು.

ಧೂಮಪಾನವನ್ನು ದೊಡ್ಡ ಹವ್ಯಾಸವಾಗಿ ತೆಗೆದು ಕೊಳ್ಳುತ್ತಿರುವ ಮತ್ತೊಂದು ದೇಶ ಎಂದರೆ ಇಂಡೋನೇಶಿಯ. ಈ ದೇಶದಲ್ಲಿ ಎರಡು ಕೋಟಿ ಗೂ ಹೆಚ್ಚು “ಬಾಲ ಧೂಮಪಾನಿ” ಗಳಿದ್ದಾರಂತೆ. ನಮ್ಮಲ್ಲಿನ ಬಾಲ ಕಾರ್ಮಿಕರ ಸಮಸ್ಯೆ ಥರ. ನೈಜೀರಿಯ, ಯುಕ್ರೇನ್, ಬ್ರೆಜಿಲ್ ಮುಂತಾದ ದೇಶಗಳಲ್ಲಿ ಸಿಗರೆಟ್ ಕಂಪೆನಿಗಳು ಬರೀ ಕ್ರೀಡೆಗಳನ್ನು ಮಾತ್ರವಲ್ಲ ರಾತ್ರಿ ಕ್ಲಬ್ಬುಗಳನ್ನೂ ಪ್ರಾಯೋಜಿಸುತ್ತಿದ್ದಾರಂತೆ. ಕುಡಿದು, ಸೇದಿ, ಮಸ್ತ್ ಮಜಾ ಮಾಡಿ ಎಂದು. Life is short, you see?  ರಷ್ಯಾದಲ್ಲಿ ಮಹಿಳೆಯರನ್ನು ಸ್ಮೋಕಿಂಗ್ ಚಟಕ್ಕೆ ಎಳೆಯಲು ಸಿಗರೆಟ್ ಪ್ಯಾಕೆಟ್ ಗಳನ್ನು ವಜ್ರ ಲೇಪನದ ಸುಗಂಧ್ಯ ದ್ರವ್ಯದ ಬಾಟಲಿನಂತೆ ರೂಪಿಸಿದ್ದಾರಂತೆ. ನೋಡಿದಿರಾ, ಜನರನ್ನು ಕೊಲ್ಲಲು ಅನುಸರಿಸುವ ವಿಧಿ ವಿಧಾನಗಳನ್ನು? ಆದರೂ ಇವರು ಪಾಶ್ಚಾತ್ಯರು, ಸುಸಂಸ್ಕೃತರು. ಇವರು ಮಾಡುವಕ್ಕೆದೆಲ್ಲಾ free trade ಎನ್ನುವ ಹಣೆಪಟ್ಟಿ.      

ಕ್ಯಾನ್ಸರ್ ತಜ್ಞ ನೂ (oncologist) ಆದ ಉರುಗ್ವೆ ದೇಶದ ಅಧ್ಯಕ್ಷ ಧೂಮಪಾನದ ಮೇಲೆ ನಿಗ್ರಹ ಹೇರಿದ್ದಕ್ಕೆ ವಿಶ್ವ ವಿಖ್ಯಾತ ಸಿಗರೆಟ್ ಕಂಪೆನಿ ‘ಫಿಲಿಪ್ ಮೋರಿಸ್’ ಅಲ್ಲಿನ ಸರಕಾರವನ್ನು ನ್ಯಾಯಾಲಯಕ್ಕೆ ಎಳೆದಿದೆ. ಈ ವ್ಯಾಜ್ಯದಲ್ಲಿ ಒಂದು ವೇಳೆ ಗ್ರಹಚಾರಕ್ಕೇನಾದರೂ ಉರುಗ್ವೆ ಸೋತರೆ ಸುಮಾರು ೯,೦೦೦ ಸಾವಿರ ಕೋಟಿ ರೂಪಾಯಿ ಈ ಕಂಪೆನಿಗೆ ಪಾವತಿಸಬೇಕಂತೆ. ಪಾಪ ಟೋಬಾಕೋ ಕಂಪೆನಿಗಳ ಈ ನಿಲುವಿಗೆ ಹೆದರಿ ಮಧ್ಯ ಅಮೆರಿಕೆಯ ಇತರ ಬಡ ರಾಷ್ಟ್ರಗಳು ಸೊಕ್ಕಿದ ಫಿಲಿಪ್ ಮೋರಿಸ್ ನಂಥ ಕಂಪೆನಿಗಳ ಸಹವಾಸಕ್ಕೆ ಹೋಗುತ್ತಿಲ್ಲವಂತೆ. ಉರುಗ್ವೆ ವಿರುದ್ಧದ ಈ ವ್ಯಾಜ್ಯದಲ್ಲಿ ಫಿಲಿಪ್ ಮೋರಿಸ್ ಗೆದ್ದರೆ ಗೊತ್ತೇ ಇದೆಯಲ್ಲಾ, ಇನ್ನಷ್ಟು ರಂಗು ರಂಜಿತ ಪ್ಯಾಕೆಟ್ ಗಳು ಮಾರಾಟಕ್ಕೆ ಬರುತ್ತವೆ. ಧೂಮ ಪಾನ ಪ್ರೊಮೋಟ್ ಮಾಡಲು ಮತ್ತಷ್ಟು ಬೆಡಗಿಯರನ್ನು hire ಮಾಡುತ್ತಾರೆ. ಒಂದು ಕಡೆ ಇವರುಗಳು ಉತ್ಪಾದಿಸುವ ಸಿಗರೆಟ್ ಸೇದೀ ಸೇದೀ ಯುವಜನರು ರೋಗಗಳನ್ನು ಅಂಟಿಸಿ ಕೊಂಡು ಸಾಯುತ್ತಿದ್ದರೆ, ಮತ್ತೊಂದು ಕಡೆ ಸಾವಿನ ಅಂಗಡಿ ತೆರೆದು ಕೂತಿರುವ ಸಿಗರೆಟ್ ಕಂಪೆನಿಗಳ CEO ಗಳು, ಉನ್ನತ ಅಧಿಕಾರಿಗಳು ಕೋಟಿಗಟ್ಟಲೆ ಹಣವನ್ನು ಬೋನಸ್ ಆಗಿ ಪಡೆದು “SMOKE FREE” ವಲಯಗಳಲ್ಲಿ, ರೆಸಾರ್ಟ್ ಗಳಲ್ಲಿ ಮಜಾ ಉಡಾಯಿಸುತ್ತಿದ್ದಾರೆ. ಶ್ ಶ್ ಶ್, the world is still a fair place.

ಎಲ್ಲ ದಿನಗಳ ರೀತಿ ಸೂರ್ಯ ಮುಳುಗುವುದರೊಂದಿಗೆ ತಂಬಾಕು ರಹಿತ ದಿನವೂ ಮಾಯಾವಾಗುತ್ತದೆ. ಅದರೊಂದಿಗೆ ಸಾವಿರಾರು ಬಡ ಜೀವಗಳೂ ಸಹ.

 

ನಡೆದಾಡುವ ನೈದಿಲೆ…ಓಡಾಡುವ porn ಮಸಾಲ

cheergirl ಗಳು ನಡೆದಾಡುವ ನೈದಿಲೆ ಅಲ್ಲ, ಓಡಾಡುವ porn ಗಳು. ಈ ಮಾತನ್ನು ಯಾವುದೇ ಸಂಪ್ರದಾಯವಾದಿ ಹೇಳಿದ್ದಲ್ಲ. ಕ್ರಿಕೆಟ್ ಆಟದಲ್ಲಿ ಸಿಕ್ಸರ್ ಗಳು ಸಿಡಿದಾಗ, ವಿಕೆಟ್ ಪತನಗೊಂಡಾಗ ಮಾದಕ ನೃತ್ಯ ಮಾಡಿ ಜನರನ್ನು ಆಟಗಾರರನ್ನು ಹುರಿದುಂಬಿಸಲು ನೇಮಕಗೊಂಡ, ಚಿಯರ್ ಗರ್ಲ್ ವೃತ್ತಿಯನ್ನು ಆರಿಸಿಕೊಂಡ  ಹೆಣ್ಣು ಮಗಳ ಅಳಲು, ದುಮ್ಮಾನ ತುಂಬಿದ ಮಾತುಗಳು. ಕ್ರಿಕೆಟ್ ಮ್ಯಾಚ್ ಹೆಸರಿನಲ್ಲಿ ಜೊಳ್ಳು ಸುರಿಸುತ್ತಾ ಟೀವೀ ಪರದೆ ಮುಂದೆ ಕೂತು ಈ ಹುಡುಗಿಯರ ಹಾವಭಾವವನ್ನು ಆಸ್ವಾದಿಸುವ ನಾವು ಎಂದಾದರೂ ಈ ಹೆಣ್ಣುಮಕ್ಕಳ ಅರೆನಗ್ನ ಶೋಷಣೆಯ ಬಗ್ಗೆ ಆಲೋಚಿಸಿದ್ದೇವೆಯೇ? ಅವರುಗಳ ಹಾವ ಭಾವ, curve ಗಳನ್ನು ನೋಡುತ್ತಾ ಮೈಮರೆಯುವ ಉನ್ಮತ್ತ ಮನಸ್ಸು ಈ ಚಿಂತನೆಗೆ ತನ್ನ ಮೆದುಳನ್ನು ತಯಾರು ಮಾಡೀತೇ?  we are like walking porn ಎಂದು ಹೇಳುವ ಈ ಹುಡುಗಿಯ ಮಾತುಗಳು, ನಮ್ಮಲ್ಲಿ ಪ್ರತಿಭಟಿಸುವ ದನಿಯನ್ನು ಹುಟ್ಟು ಹಾಕೀತೇ?

೨೨ ವರ್ಷದ Gabriella Pasqualotto ಹೇಳುತ್ತಾಳೆ, it’s true. At parties, once people are drunk, they get really touchy-freely and misbehave, assuming that we’re easy girls,”- ಹೇಗಿದೆ ನೋಡಿ ಮೇಲಿನ ಆಕೆಯ ಮಾತುಗಳು. ಇಲ್ಲಿ ಒಂದು ಮಾತನ್ನು ನೆನಪಿಡಬೇಕು. ಯಾವಾಗ ಹೆಣ್ಣು ಕನಿಷ್ಠ ಉಡುಗೆ ತೊಡುತ್ತಾಳೋ, ಪ್ರಚೋದಕ ರೀತಿಯಲ್ಲಿ ಆಕೆಯ ಮೈ ಪ್ರದರ್ಶನ ನಡೆಯುವುದೋ, ಹಾವಭಾವ ಪ್ರದರ್ಶನ ಆಗುವುದೋ ಆದರೆ ತಪ್ಪು ಸನ್ನೆಗೆ ಎಡೆಮಾಡಿಕೊಟ್ಟು ಅವಳನ್ನು ಜನ ಸಾರ್ವಜನಿಕ ಉದ್ಯಾನ ಎಂದು ಭಾವಿಸಲು ಆರಂಭಿಸುತ್ತಾರೆ. easy girl ಎಂದು ಹಿಂಬಾಲಿಸುತ್ತಾರೆ. ಹಾಗಾದರೆ ಉಡುಗೆ ತೊಡುಗೆ ಯ ಶಿಷ್ಟಾಚಾರ ಹೆಣ್ಣಿಗೆ ಮಾತ್ರ ಸೀಮಿತವೋ? ಗಂಡು ಹೇಗೆ ಬೇಕಾದರೂ ಹಾಗೆ ವರ್ತಿಸಬಹುದೋ? ಅಲ್ಲ, ಗಂಡೂ ಸಹ ಮಾನವಾಗಿ ತೊಡಲು ಕಲಿಯಬೇಕು. ಆದರೆ ನಿಸರ್ಗದತ್ತವಾಗಿ ಗಂಡು ಹಚ್ಚು visual ಮತ್ತು ಹೆಣ್ಣು more practical ಆದ ಕಾರಣ ಹೆಣ್ಣು ಸ್ವಲ್ಪ ಜಾಗರೂಕಳಾಗಿರುವುದು ಕ್ಷೇಮ. 

ಹೆಣ್ಣು ಮಾನವಾಗಿ ಉಡಬೇಕು ಎಂದು ಹಿರಿಯರು ಹೇಳುತ್ತಿದ್ದರು. ಸಂಜೆಯ ಹೊತ್ತು ಮನೆಯ ಜಗುಲಿಯ ಮೇಲೋ, ಮೆಟ್ಟಿಲುಗಳ ಮೇಲೋ ಕೂತ ಹೆಣ್ಣು ಮಗಳಿಗೆ ತಾಯಿ ಗದರಿಸುವುದಿದೆ, ಕಾಲಿನ ಮೇಲೆ ಲಂಗ ಎಳೆದು ಕೋ ಎಂದು. ದಾರಿ ಹೋಕರಿಗೆ ತನ್ನ ಮಗಳ ಹಾವ ಭಾವ ಯಾವುದೇ ರೀತಿಯ ಕೆಟ್ಟ ನೋಟ ಕ್ಕೆ ಎಡೆ ಮಾಡಿ ಕೊಡಬಾರದು ಎಂದು ತಾಯಿಯಾದವಳ ಕಾಳಜಿ, ಮುತುವರ್ಜಿ. ಈ ಮುತವರ್ಜಿ ಆ ತಾಯಿಗೆ ತನ್ನ ಸಂಸ್ಕಾರ ಕಲಿಸಿರುತ್ತದೆ.    

ಮುಂದುವರೆಯುತ್ತಾ “ಗೇಬ್ರಿಯೆಲಾ” ಹೀಗೆ ಟ್ವೀಟಿಸುತ್ತಾಳೆ, people treat us like ‘pieces of meat’- ಇಲ್ಲದೆ ಏನಂತೆ, ಹೌದು ಚರ್ಮದ ಪ್ರದರ್ಶನ ಹೆಚ್ಚಾದಾಗ ಮೈ ಮನಸ್ಸು ಮಾಂಸ ದ ತುಂಡಿಗಾಗಿ ಹಾತೊರೆಯುವುದು ಸಹಜವೇ.

To the citizens, we are practically like walking porn!…. it is complete voyeurism… the men see your face, then your boobs, your butt, and then your boobs again..ಭಾಷೆಯ ಮರ್ಯಾದೆಯನ್ನು ಬದಿಗಿಟ್ಟು ಬರೆಯಬೇಕಾದೀತೆನ್ನುವ ಆತಂಕದಿಂದ  ಮೇಲಿನದನ್ನು ಭಾಷಾಂತರಿಸಿಲ್ಲ. ತಲೆಯ ಮೇಲೆ ಮೊಳೆ ಹೊಡೆವ ರೀತಿಯಲ್ಲಿಲ್ಲವೇ ಮೇಲಿನ ಮಾತುಗಳು?

ಚೀರ್ ಗರ್ಲ್ಸ್ ಇಲ್ಲದೆಯೂ ಕ್ರಿಕೆಟ್ ರಂಜಕ, ಮೋಹಕ. ಇವರಿಲ್ಲದೆಯೂ ಕ್ರಿಕೆಟ್ ಆಟವನ್ನು ಆಸ್ವಾದಿಸ ಬಹುದು. ಒಂದೊಮ್ಮೆ ಆಸ್ವಾದಿಸಿಯೂ ಇದ್ದೇವೆ. ಎಷ್ಟೋ ಜನ ಈ ಚಿಯರ್ ಗರ್ಲ್ ಗಳ ಕಾರಣ ಕ್ರಿಕೆಟ್ ಆಟದ ಬಗ್ಗೆ ಆಸಕ್ತಿ ಹುಟ್ಟಿಸಿ ಕೊಂಡಿದ್ದಾರೆಂದೂ ಕೇಳಿದ್ದೇನೆ.  

ಆದರೆ ದಿನಗಳೆದಂತೆ, ಕಾಲ ಚಕ್ರ ಓಡುತ್ತಿರುವಂತೆ ನಮ್ಮ ಅಭಿರುಚಿಗಳೂ ಬದಲಾಗುತ್ತಿವೆ ಒಳ್ಳೆಯದರಿಂದ ಕೆಡುಕಿನ ಕಡೆಗೆ. ಇಂದು ನಮ್ಮ ಹೆಣ್ಣು ಮಕ್ಕಳು ತಮ್ಮ ಫೇಸ್ ಬುಕ್ ಪ್ರೊಫೈಲ್ ನಲ್ಲಿ “ relationship: its complicated” ಎಂದು ಬರೆಯಲು ಹಿಂದೆ ಮುಂದೆ ನೋಡುತ್ತಿಲ್ಲ. ಈಗ ಎಲ್ಲವೂ ‘ಕೂಲ್’.