ನಾಳೆಯ valentines ದಿನದಂದು ನಿಮ್ಮ ತಾಯಿಯನ್ನು ಪ್ರೀತಿಸಿ.

ಫೆಬ್ರವರಿ ೧೪ ಬಂತೆಂದರೆ ಕೆಲವರಲ್ಲಿ ಅದೇನೋ ಒಂದು ರೀತಿಯ ರೋಮಾಂಚನ ಮಿಶ್ರಿತ ನಡುಕವಾದರೆ ಮತ್ತೆ ಕೆಲವರಿಗೆ ಭೀತಿಯ ನಡುಕ. ಪ್ರೇಮಿಗಳಿಗೆ ತನ್ನನ್ನು ಪ್ರೀತಿಸುವ ವ್ಯಕ್ತಿ ಏನು ತರಬಹುದು, ಯಾವ ರೆಸ್ಟುರಾಂಟ್ ಗೆ ಕರೆದುಕೊಂಡು ಹೋಗಬಹುದು ಎನ್ನುವ ನವಿರೇಳುವ ನಡುಕವಾದರೆ, ಜೋಡಿಗಳನ್ನು ಆಮಂತ್ರಿಸಿದ್ದಕ್ಕೆ, ಹುರಿದುಂಬಿಸಿದ್ದಕ್ಕೆ  ತನ್ನ ಅಂಗಡಿ ಅಥವಾ ರೆಸ್ಟುರಾಂಟ್ ನ ಗಾಜುಗಳು ಎಲ್ಲಿ ವಿರೋಧಿಸುವವರ ಕಲ್ಲಿಗೆ ಚಲ್ಲಾಪಿಲ್ಲಿ ಆಗಬಹುದೋ ಎನ್ನುವ ಭೀತಿಯ ನಡುಕ ಇನ್ನು ಕೆಲವರಿಗೆ.   

ಮಕ್ಕಳ ದಿನಾಚರಣೆಯಿಂದ ಹಿಡಿದು ಊರುಗೋಲು ಹಿಡಿದು ನಡೆಯುವವರ ದಿನದವರೆಗೂ ವೈವಿಧ್ಯಗಳಿವೆ ದಿನಾಚರಣೆಗಳಿಗೆ. ಪ್ರೇಮಿಗಳಿಗೂ ಒಂದು ದಿನ. ಅದೇ valentine’s day. ಆದರೆ ಪ್ರೀತಿ ಎನ್ನುವುದು  ಬರೀ ಗಂಡು ಹೆಣ್ಣಿನ ನಡುವಿನ ಸಾಂಗತ್ಯ ಅಥವಾ ಸರಸವೇ ಆಗಬೇಕಿಲ್ಲ. ಪ್ರೀತಿಯನ್ನು platonic love ಆಗಿ ಪರಿವರ್ತಿಸಿದಾಗ ನಮ್ಮ ಸಹೋದ್ಯೋಗಿ, ನೆರೆಯವರು, ಸ್ನೇಹಿತರು, ಉದ್ರಿ ಕೊಡುವ ದಿನಸಿ ಅಂಗಡಿಯವ, ದಿನಪತ್ರಿಕೆ ಹಾಕುವ ವ್ಯಕ್ತಿ ಹೀಗೆ ಎಲ್ಲರೂ ಅರ್ಹರಾಗಬಹುದು ನಮ್ಮ ಪ್ರೀತಿಗೆ. ಈ ಕೆಳಗೆ ಕಾಣಿಸಿದ ಸಲಹೆಗಳು valentines ದಿನಕ್ಕೆ ಒಂದು ಹೊಸ ರೀತಿಯ ಹುರುಪು, ಭರವಸೆ ಮೂಡಿಸಬಹುದು.

ಬೆಳ್ಳಂಬೆಳಗ್ಗೆ ನಮ್ಮ ಗೇಟಿಗೆ ನ್ಯೂಸ್ ಪೇಪರ್ ಸಿಕ್ಕಿಸುವ ಹುಡುಗನನ್ನು ಹುಬ್ಬು ಗಂಟಿಕ್ಕಿ ಸ್ವಾಗತಿಸುವುದಕ್ಕಿಂತ ಅವನು ನಮ್ಮ ಹಾಗೆಯೇ ಒಬ್ಬ ಮನುಷ್ಯ ಎಂದು ಬಗೆದು ಮುಗುಳ್ನಕ್ಕು, ಒಂದು ಲಕೋಟೆಯಲ್ಲಿ ೧೦ ರೂಪಾಯಿ ಇಟ್ಟು ಕೊಟ್ಟರೆ ಹೇಗಿರಬಹುದು? ಅವನು ಆಸೆ ಪಡುತ್ತಿದ್ದ ಯಾವುದಾದರೂ ವಸ್ತು ಕೊಳ್ಳಲು ನಿಮ್ಮ ಆ ಕಾಣಿಕೆ ಅವನಿಗೆ ನೆರವಾಗಬಹುದು.

ಮನೆಯ ಮುಂದೆ ನಿಂತು ಈರುಳ್ಳಿ, ಟೊಮೇಟೋ ಎಂದು ಕೂಗುತ್ತಾ ತರಕಾರಿ ಮಾರುವವನಿಗೆ ಒಂದು ದಿನವಾದರೂ ಚೌಕಾಶಿಯಿಂದ ಮುಕ್ತಿ ಕೊಡಿಸಿ. ಈ ಒಂದು ದಿನವಾದರೂ ಅವನು ಹೇಳಿದ ಬೆಲೆ ಕೊಟ್ಟು ಬೆಳ್ಳುಳ್ಳಿ ಕೊಂಡು ಕೊಳ್ಳಿ. ಅಯ್ಯೋ ಇನ್ನೊಂದು ಬೆಳ್ಳುಳ್ಳಿ ಹಾಕು, ನಿನ್ ಗಂಟು ಹೋಗಲ್ಲ ಎಂದು ಗದರಿಸಿ greedy ಆಗಬೇಡಿ.

ನಿಮ್ಮ ತಾಯಿಯನ್ನು ಪ್ರೀತಿಸಿ. ಹಾಂ, ನಾವು ಯಾವಾಗಲೂ ಪ್ರೀತಿಸುತ್ತೇವೆ, ಅಷ್ಟು ಮಾತ್ರವಲ್ಲ mother’s day ಇದ್ದೇ ಇದೆಯಲ್ಲ ಎಂದು ಹೇಳಬೇಡಿ. ತಾಯಿ ಅಂದರೆ ನಮ್ಮ ಹೆತ್ತಬ್ಬೆ ಅಲ್ಲ, ಕೋಟ್ಯಂತರ ಹೆತ್ತಬ್ಬೆಯರನ್ನೂ, ನಮ್ಮನ್ನೂ ಹೊತ್ತೂ ಹೊತ್ತೂ ಬಳಲಿದ “ಭೂತಾಯಿ” ಯನ್ನು ಪ್ರೀತಿಸಿ. ಈ ಒಂದು ದಿನವಾದರೂ disposable ಗಳ ಸಹವಾಸ ಬಿಡಿ. ಅವು ಕಳಿಸುವ CFC (chloro fluoro carbon)  ನಮ್ಮ ತಾಯಿಯನ್ನು ಇನ್ನಷ್ಟು ಕ್ಷೀಣಗೊಳಿಸುತ್ತಿದೆ. ಸಾಧ್ಯವಾದರೆ ಕಳೆದ ಆರು ತಿಂಗಳಿನಿಂದ ಸೋರುತ್ತಿರುವ ನಲ್ಲಿಗೆ ಏನಾದರೂ ರಿಪೇರಿ ಮಾಡಿ, ಅಮೂಲ್ಯವಾದ ನೀರಿನ ಹನಿಗಳನ್ನು ಉಳಿಸಿ.

ಬೆಳಿಗ್ಗೆ ಸ್ನಾನ ಮಾಡಿ ಬಟ್ಟೆ ತೊಡುವಾಗ ಡಿಸ್ಕೌಂಟ್ ಆಸೆಗೆ ಬಿದ್ದು ಖರೀಸಿದ ಆದರೆ ಎಂದೂ ತೊಡದ ಆ ಟೀ ಶರ್ಟ್ ಅಥವಾ “ಮ್ಯಾಕ್ಸಿ” ಯನ್ನು ಯಾರಿಗಾದರೂ ದಾನ ಮಾಡಿ. ಹಾಗೆಯೆ ಯಾವುದಾದರೂ ಉಪಯೋಗಿಸದ ವಸ್ತು ಅಟ್ಟದ ಮೇಲಿದ್ದರೆ ಅದಕ್ಕೂ ಮೋಕ್ಷ ಕಾಣಿಸಿ. ದಾನ ನೀಡುವವನು “ದಾನವ” ನಾಗೋಲ್ಲ ಬದಲಿಗೆ ನಿಜವಾದ ಮನುಷ್ಯನಾಗುತ್ತಾನೆ, ದೇವರ ಮುಖದ ಮೇಲೆ ಮಂದಹಾಸ ತರುತ್ತಾನೆ. ಹಿಂಸೆ ಕಂಡೂ ಕಂಡೂ ರೋಸಿದ ಪರಮಾತ್ಮನಿಗೂ ಒಂದು smile ದಾನ ಮಾಡಿದಂತೆ ಈ ಸುದಿನದಂದು.

ದೊಡ್ಡ ಮನಸ್ಸು ಮಾಡಿ ಒಂದು ಪುಸ್ತಕ ಖರೀದಿಸಿ. ರಕ್ತದೊತ್ತಡ ಹೆಚ್ಚು ಮಾಡುವ ಪುಸ್ತಕವೋ, ಪತ್ರಿಕೆಯೋ ಅಲ್ಲ. ಏಗ್ದಾಗೆಲ್ಲಾ ಐತೆ ತೆರನಾದ, ಅಥವಾ ಅಕ್ಕ ಮಹಾದೇವಿ, ಶಿಶುನಾಳ ಶರೀಫರ ಬದುಕಿನ ನಿಜವಾದ ಅರ್ಥ ಹೇಳುವ ಪುಸ್ತಕವನ್ನು ಕೊಳ್ಳಿ.

ರಸ್ತೆಯಲ್ಲಿ ಹಾದುಹೋಗುವಾಗ ಯಾವುದಾದರೂ ಆಸ್ಪತ್ರೆ ಕಂಡರೆ ಜಗುಲಿಯ ಮೇಲೆ ಅಸಹಾಯಕನಾಗಿ ಕೂತ ವನಿಗೆ ಹಣ್ಣು ಹಂಪಲು ಕೊಡಿಸಿ ಅಥವಾ ಏನಾದರೂ ಧನ ಸಹಾಯ ಮಾಡಿ. ಅವನ ಮುಖದ ಮೇಲೆ ನೀವು ಕಾಣುವ ಹರ್ಷ ನಿಮ್ಮ valentine ದಿನಕ್ಕೆ ಒಂದು ಹೊಸ, ಅವರ್ಣನೀಯ ಅರ್ಥವನ್ನು ತಂದು ಕೊಡುತ್ತದೆ.

ಮೊಬೈಲ್ ಉಪಕರಣದ ರಿಂಗ್ ಟೋನ್ ವಾಲ್ಯೂಮ್ ಇನ್ನಷ್ಟು ಕಡಿಮೆ ಮಾಡಿ. ನೀವು ಹಾಕಿರುವ ಆ ಕರ್ಕಶ ಹಾಡನ್ನು ಇಡೀ ವಿಶ್ವ ಈಗಾಗಲೇ ಕೇಳಿಯಾಗಿದೆ. ಮೊಬೈಲ್ ರಿಂಗ್ ಆದ ಕೂಡಲೇ ಅಲ್ಲೇ ಪಕ್ಕದಲ್ಲೇ ಇರುವ “silence” ಗುಂಡಿಯನ್ನು ಒತ್ತಿ ಶಬ್ದ ಮಾಲಿನ್ಯ ಕಡಿಮೆ ಮಾಡಿ.           

ಸೂಟು ಬೂಟು ತೊಟ್ಟು ಅಥವಾ ಆಕರ್ಷಕವಾಗಿ ಬಟ್ಟೆ ಧರಿಸಿಯೂ ಕನ್ನಡ ಮಾತನಾಡಬಹುದು ಎಂದು ಸುತ್ತಲಿನವರಿಗೆ ತೋರಿಸಿ. ಆಂಗ್ಲ ಭಾಷೆಯೂ ಇರಲಿ, ಆದರೆ ಕನ್ನಡ ಹೆಚ್ಚು ಆಕರ್ಷಕ ಎಂದು ಮನವರಿಕೆ ಮಾಡಿಸಿ.    

ಟ್ರಾಫಿಕ್ ಸಿಗ್ನಲ್ ಬಳಿಯೋ, ಪಾರ್ಕಿಂಗ್ ಲಾಟ್ ಹತ್ತಿರವೋ ಸಿಗುವ ಸಪ್ಪೆ ಮುಖದ ಅಪರಿಚಿತನ ಕಡೆ ಮುಗುಳ್ನಗೆ ಬೀರಿ. ಪ್ರಪಂಚ ನಾವೆಣಿಸಿದಷ್ಟು ಕೆಟ್ಟಿಲ್ಲ ಎನ್ನುವ ಭಾವನೆ ಅವನಲ್ಲಿ ಮೂಡಿಸಿ.   

ಬೆಳಗ್ಗಿನಿಂದ ರಾತ್ರಿವರೆಗೂ ಕರಿದಿದ್ದು, ಹುರಿದಿದ್ದು ತಿಂದೂ ತಿಂದೂ ಏರಿಸಿಕೊಂಡ BP ಎನ್ನುವ “ಮೌನ ಹಂತಕ” (SILENT KILLER) ನ ಕಡೆ ಕಣ್ಣು ಹಾಯಿಸಿ. ಉದಾಸೀನ ಮಾಡದೆ bp ಪರೀಕ್ಷಿಸಿ. ಉಪ್ಪಿಗಿಂತ ರುಚಿಯಿಲ್ಲ ಎನ್ನೋ ಮಾತು ಗಾದೆಗೆ ಸೀಮಿತವಾಗಲಿ, ಟೇಬಲ್ ಸಾಲ್ಟ್ ಅನ್ನು ಸಂಪೂರ್ಣ ಉಪೇಕ್ಷಿಸಿ. ಒಂದರ್ಧ ಘಂಟೆ ನಡೆಯಿರಿ. ಇಂದೂ, ದಿನವೂ.  ನಿಮ್ಮ ದೀರ್ಘಾಯಸ್ಸು ನಿಮಗಲ್ಲದಿದ್ದರೂ ನಿಮ್ಮನ್ನು ಪ್ರೀತಿಸುವವರಿಗಾಗಿರಲಿ.     

ಕೊನೆಯದಾಗಿ, ತನಗಿರುವ ಎರಡು ಕೈ, ಎರಡು ಕಾಲುಗಳನ್ನು ದ್ವಿಗುಣ, ತ್ರಿಗುಣಗೊಳಿಸಿ ಹೆಣಗುತ್ತಾ ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಫೀಸಿಗೆ ಮತ್ತು ಶಾಲೆಗೆ ಹೊರಡಿಸುವ ತಂಗಾಳಿ ರೀತಿಯ thankless ಜೀವಕ್ಕೊಂದು ಕೆಂಪು ಗುಲಾಬಿ ಕೊಟ್ಟು ನೀನಿಲ್ಲದ ದಿನ ದಿನವೇ ಅಲ್ಲ ಎನ್ನುವ ಭಾವನೆ ವ್ಯಕ್ತಪಡಿಸಿ.  

ನಲ್ಮೆಯ ಸಂಪದದ ಬಂಧು ಭಗಿನಿಯರಿಗೆ ಪ್ರೀತಿಯ ದಿನದ ಅತ್ಯಂತ ಪ್ರೀತಿಯ ಹಾರೈಕೆಗಳು. 

ಮೇಲಿನ ಲೇಖನಕ್ಕೆ ಸ್ಫೂರ್ತಿ ಈ ವೆಬ್ ತಾಣ: http://philanthropywriting.com/2011/02/09/16-charitable-ways-to-celebrate-valentines-day/

ಸಂದರ್ಶನದಲ್ಲಿ ಕೇಳಿದ ಪ್ರಶ್ನೆ, ನಿನ್ನ ಸ್ತನಗಳು ಎಷ್ಟು ದಪ್ಪ?

ಮನೆಗೆಲಸಕ್ಕೆಂದು ಕೆಲಸಕ್ಕಿಟ್ಟರೆ ಆ ಮನೆಯ ರಹಸ್ಯವನ್ನು ಟಾಮ್ ಟಾಮ್ ಹೊಡೆದು ಹೇಳಬಾರದು. ಆದರೆ ಮನಸ್ಸು ಕೆಟ್ಟಾಗ, ಯಜಮಾನರು ತನ್ನನ್ನು ಮನುಷ್ಯರಂತೆ ಕಾಣಲು ವಿಫಲರಾದಾಗ ಅಂಥ ಜನರ ಮೇಲೆ ಹೇಸಿಗೆ ಹುಟ್ಟಿ ತಮ್ಮ ಅನುಭವವನ್ನು ಹೇಳಿ ಎದೆ ಹಗುರ ಮಾಡಿಕೊಳ್ಳುತ್ತಾರೆ ಕೆಲವರು. ಜರ್ಮನಿಯಲ್ಲಿ ಪೋಲಂಡ್ ದೇಶದ ಆಯಾಗಳು ಹೆಚ್ಚು. ಬರ್ಲಿನ್ ಗೋಡೆ ಬಿದ್ದ ನಂತರ ಪೋಲಂಡಿ ನಿಂದ ೫ ಲಕ್ಷಕ್ಕೂ ಹೆಚ್ಚು ಆಯಾಗಳು ಕೆಲಸಕ್ಕಾಗಿ ಜರ್ಮನಿಗೆ ಬಂದರು. ಜರ್ಮನಿ ಯೂರೋಪಿನ ಮಾತ್ರವಲ್ಲ ಜಗತ್ತಿನ ಶ್ರೀಮಂತ ದೇಶಗಳಲ್ಲೊಂದು. ಜರ್ಮನಿ ಸುಶಿಕ್ಷಿತ ದೇಶವಾದ್ದರಿಂದ ಎಲ್ಲರೂ ತಿಳಿದದ್ದು ಬಹಳ ಸಂಭಾವಿತರು, ಅತ್ಯಂತ ಶುಚಿತ್ವವಿರುವುವರು, ಶಿಸ್ತಿನ ಜನ ಎಂದು. ಆದರೆ ಈ ಆಯಾ ಅದೆಲ್ಲಾ ಸುಳ್ಳಿನ ಸರಮಾಲೆ, ಸತ್ಯ ನೋಡಿ ಇಲ್ಲಿದೆ ಎಂದು ಸುರುಳಿ ಬಿಚ್ಚಿಟ್ಟಳು ತಾನು ಬರೆದ ಪುಸ್ತಕ Under German Beds ರಲ್ಲಿ.

ಕೆಲಸಕ್ಕೆ ಸೇರುವ ಮುಂಚಿನ ಫೋನ್ ಸಂದರ್ಶನದಲ್ಲಿ ಮನೆ ಯಜಮಾನ ಕೇಳುವ ಪ್ರಶ್ನೆ “ ನಿನ್ನ ಮೊಲೆಗಳು ದಪ್ಪ ಇವೆಯೇ?” ಕೆಮ್ಪ್ಪು ಬಣ್ಣದ ಚಡ್ಡಿ ಧರಿಸುತ್ತೀಯಾ…. ಹೇಗಿದೆ ಪ್ರಶ್ನಾವಳಿ. ನೀನು ಬೆಳಿಗ್ಗೆ ಎಷ್ಟು ಘಂಟೆಗೆ ಏಳುತ್ತೀಯಾ, ಎದ್ದ ಕೂಡಲೇ ಏನು ಮಾಡುತ್ತೀಯ ಎಂದು ಕೇಳೋ ಬದಲು ಸ್ತನಗಳ ಗಾತ್ರದ ಬಗ್ಗೆ ಚಿಂತೆ.

ಒಬ್ಬ ಯಜಮಾನನಂತೂ ಅವಳ ಮುಂದೆ ಸಂಪೂರ್ಣ ವಿವಸ್ತ್ರನಾಗಿ ನಿಂತು ಬಿಡುತ್ತಿದ್ದನಂತೆ. ಇದ್ಯಾವ ಪರೀಕ್ಷೆಯೋ?

ಜರ್ಮನ್ನರು ಕೊಳಕು ಅಂತ ಈಕೆಯ ಅಭಿಪ್ರಾಯ. ಅವರ ಬೆಡ್ ಕೆಳಗೆ ಆಗ ತಾನೇ ಕೀಳಿಸಿಕೊಂಡ ಹಲ್ಲು, ಕೋಳಿ ಮಾಂಸದ ತುಂಡು ಹೀಗೇ ಬೇಡದ ವಸ್ತುಗಳು ಬಿದ್ದಿರುತ್ತವಂತೆ. ಕೆಲವೊಮ್ಮೆ ಹಣವನ್ನೂ ಸಹ ಬೇಕಾ ಬಿಟ್ಟಿ ಎಸೆದಿರುತ್ತಾರಂತೆ ಈಕೆಯ ಪ್ರಾಮಾಣಿಕತೆಯನ್ನು ಪರೀಕ್ಷಿಸಲೆಂದು. ಇದನ್ನು ಓದಿದ ನಂತರ ತಲೆ ಹರಟೆ ಪ್ರಶ್ನೆ ಕೇಳದೆ ಕೆಲಸಕ್ಕೆ ಬೇಕಾದ ಪ್ರಶ್ನೆ ಮಾತ್ರ ಕೇಳಿ, ಇಲ್ಲದಿದ್ದರೆ ನಿಮ್ಮನ್ನು ಉದಾಹರಣೆಯಾಗಿಸಿ ಪುಸ್ತಕವೊಂದು ಬಂದೀತು ಮಾರುಕಟ್ಟೆಗೆ.

ಅಪರೂಪದ ದೇವಾಲಯ

ಕೇಂದ್ರದ ಮಾಜಿ ಸಚಿವ ಶಶಿ ತರೂರ್ ತಮ್ಮ ‘ಟ್ವಿಟ್ಟರ್’ ಪುಟದಲ್ಲಿ ಕೇರಳದ ದೇವಾಲಯವೊಂದರ ಸ್ವಾರಸ್ಯದ ಬಗ್ಗೆ ಬರೆದಿದ್ದರು. ಅವರು ನೋಡಿದ ದೇವಾಲಯದಲ್ಲಿ ಗಣೇಶ ಮತ್ತು ಶ್ರೀ ಕೃಷ್ಣರ ವಿಗ್ರಹಗಳು ಒಟ್ಟಿಗೆ ಇದ್ದು, ಹೀಗೆ ಈ ಎರಡು ದೇವರುಗಳು ಜೊತೆಯಾಗಿ ಇರುವ ದೇವಾಲಯ ಬೇರೆಯೂ ಇದೆಯೇ ಎಂದು ಕೇಳಿದ್ದರು.

ಕೇರಳದ ಕೋಟ್ಟಯಂ ಜಿಲ್ಲೆಯ ಕುರುಪ್ಪಂತರ ಸ್ಥಳದಲ್ಲಿ ಇರುವ ಈ ಅಪರೂಪದ  ದೇವಾಲಯದ ಬಗ್ಗೆ ನನಗೂ ಆಸಕ್ತಿ ಹುಟ್ಟಿತು ಮಧ್ಯ ರಾತ್ರಿ ಯಲ್ಲಿ. ನೆಟ್ ಬಂಟ ಗೂಗ್ಲ್ ನಮಗಾಗಿ ಮತ್ತು ಇಂಥ ಕುತೂಹಲ ತಣಿಸಲು ತಾನೇ ಇರುವುದು? ಕೆಲವೇ ಸೆಕೆಂಡುಗಳಲ್ಲಿ ದೇವಾಲಯ ತೆರೆದು ಕೊಂಡಿತು. “ಮಳ್ಳಿಯೂರ್ ಶ್ರೀ ಗಣೇಶಾಯ ನಮಃ, ಅವಿಘನಮಸ್ತು ಶ್ರೀ ಕೃಷ್ಣಾಯ ನಮಃ” ಎನ್ನುವ ಬ್ಯಾನರ್ ಹೊತ್ತ ಈ ವೆಬ್ ತಾಣದಲ್ಲಿ ಸುಂದರ ಮಂದಿರದ ಚಿತ್ರವಿದೆ. ಈ ಮಂದಿರದಲ್ಲಿ ಶ್ರೀ ಗಣೇಶನ ತೊಡೆಯ ಮೇಲೆ ಶ್ರೀ ಕೃಷ್ಣ ಆಸೀನನಾಗಿದ್ದಾನೆ. ಈ ದೇವಾಲಯದ ವೆಬ್ ತಾಣ ದ ವಿಳಾಸ,

http://www.malliyoortemple.com/docs/Main.asp   

ಮತ್ತೊಂದು ವಿಶೇಷ. ಕೇರಳದ ಶಬರಿ ಮಲೆ ಮೇಲೆ ಇರುವ ಅಯ್ಯಪ್ಪ ಸ್ವಾಮೀ ದೇವಸ್ಥಾನಕ್ಕೆ ಹೋಗೋ ಮೊದಲು ಬೆಟ್ಟದ ಅಡಿಯಲ್ಲಿರುವ ವಾವರ್ ಎನ್ನುವ ಸೂಫಿ ಸಂತರ ಸಮಾಧಿಗೆ ಪೂಜೆ ಸಲ್ಲಿಸಿಯೇ ಅಯ್ಯಪ್ಪನಲ್ಲಿಗೆ ಹೋಗಬೇಕಂತೆ. ವಾವರ್ ಎನ್ನುವ ಮುಸ್ಲಿಂ ಯೋಧ ಅಸುರ ಮಹಿಷಿ ಯನ್ನು ಕೊಲ್ಲಲು ಸ್ವಾಮೀ ಅಯ್ಯಪ್ಪನಿಗೆ ಸಹಾಯ ಮಾಡಿದ ಕಾರಣಕ್ಕೆ ಅಯ್ಯಪ್ಪನ ಭಕ್ತರು ವಾವರ ರ ಮಸೀದಿಗೆ ಭೇಟಿ ನೀಡುತ್ತಾರೆ. ವಿವಿಧ ಮತಗಳ ಅನುಯಾಯಿಗಳೊಂದಿಗೆ ಸಾಮರಸ್ಯ ಸಾರುವ, ಹಳೆಕಾಲದ ಈ ತೆರನಾದ ನಂಬಿಕೆಗಳು ನಮ್ಮ ದೇಶದಲ್ಲಿ  ಹೇರಳ. ಅದಕ್ಕೊಂದು ಉದಾಹರಣೆಯಾಗಿ ನಮಗೆ ಕಾಣಲು ಸಿಗುತ್ತದೆ ಅಯ್ಯಪ್ಪ ಸ್ವಾಮಿಯ ಜಾತ್ರೆ.

ನನ್ ಟೈಮ್ ಸರಿಯಿಲ್ಲ ಅಷ್ಟೇ !

ಟೈಮ್ ಸರಿಯಿಲ್ಲ, ಇದು ನಾವು ಕೇಳುವ ದೂರು . ನಮ್ಮ ಅರಿವುಗೇಡಿತನದಿಂದ ಅಥವಾ ಬೇರಾವುದಾರೂ ಕಾರಣದಿಂದ  ಬರುವ ಸಂಕಷ್ಟಗಳಿಗೆ ಸುಲಭ ಮತ್ತು ಪುಕ್ಕಟೆಯಾಗಿ ಸಮಯವನ್ನೂ ಜರೆಯುವುದು, ದೂರುವುದು ನಮ್ಮ ತಾತ ಮುತ್ತಾತಂದಿರು ನಮಗೆ ಬಳುವಳಿಯಾಗಿ ನೀಡಿದ ಜಾಯಮಾನ.  ಇಂದು ಬೆಳಿಗ್ಗೆ ನಮ್ಮ ಕಂಪೆನಿಯಲ್ಲಿ ಸೇಲ್ಸ್ ವಿಭಾಗದಲ್ಲಿ  ಕೆಲಸ ಮಾಡುವ ಒಬ್ಬರು ಬಂದು ಹೇಳಿದರು, ನಿನ್ನೆ ರಾತ್ರಿ ನನ್ನ ಲ್ಯಾಪ್ ಟಾಪ್ ಕಳುವಾಯಿತು. ಫ್ಲಾಟ್ ಹೊರಗೆ ನಿಲ್ಲಿಸಿದ್ದ ಕಾರಿನ ಗಾಜನ್ನು ಒಡೆದು ಕಳ್ಳತನ ಮಾಡಿದರು ಎಂದು ಹೇಳಿ ಏನು ಮಾಡೋದು, ನನ್ನ ಟೈಮ್ ಸರಿಯಿಲ್ಲ ಅಷ್ಟೇ ಎಂದು ಮರುಗಿದರು. ಈ ರೀತಿಯ ಕಹಿ ಅನುಭವ ಈ ವ್ಯಕ್ತಿಗೆ ಮೊದಲನೆಯದಲ್ಲ. ಕಳೆದ ವರ್ಷ ಅವರ ಫ್ಲಾಟ್ ಒಳಕ್ಕೆ ನುಗ್ಗಿ ಪತ್ನಿಯ ಒಡವೆಗಳನ್ನು ಕದ್ದೊಯ್ದಿದ್ದರು ಕಳ್ಳರು.  ಆದರೆ ಈ ಕಳ್ಳತನದ ಬಗ್ಗೆ ಮಾತ್ರ ಅವರಿಗೆ ನಿಖರವಾದ ಮಾಹಿತಿ ಇತ್ತು. ಅವರಿಗೆ ಹೊಸತಾಗಿ ಪರಿಚಯವಾಗಿದ್ದ ವ್ಯಕ್ತಿ ಮಾಡಿದ್ದೆಂದು ಅವರಿಗೆ ಚೆನ್ನಾಗಿ ತಿಳಿದಿದ್ದರೂ ಪೊಲೀಸರಿಗೆ ದೂರು ಕೊಡಲು ಹೆದರಿದರು. ಏಕೆಂದರೆ ಇಲ್ಲಿನ ಪೊಲೀಸರು ಲಂಚ, ವಶೀಲಿ ಬಾಜಿಗೆ ಬೀಳದೆ ಮುಲಾಜಿಲ್ಲದೆ ಬಾಯಿ ಬಿಡಿಸಿ ಬಿಡುತ್ತಾರೆ. ಆ ವ್ಯಕ್ತಿಯ ವಿರುದ್ಧ ದೂರು ನೀಡಿದರೆ ನಾಳೆ ಭಾರತದಲ್ಲಿ ತನಗೆ ತೊಂದರೆ ಆಗಬಹುದು ಎಂದು ಹೆದರಿ ಪೊಲೀಸ್ ದೂರು ಕೊಡಲು ಒಪ್ಪಲಿಲ್ಲ. ಎಲ್ಲಾ ನನ್ ಟೈಮ್ ಅಷ್ಟೇ ಎಂದು ಕೈ ಚೆಲ್ಲಿ ಕೂತ ಅವರಿಗೆ ನಾನು ಹೇಳಿದೆ, ನಾವು ಟೈಮ್ ಅನ್ನು ದೂರುವುದು ಸರಿಯಲ್ಲ. ಜೀವನದಲ್ಲಿ ಅದೇನು ಸಂಭವಿಸಬೇಕೋ ಅದು ಆಗಿಯೇ ತೀರುತ್ತದೆ. ನಮ್ಮಿಂದ ಅದನ್ನು  ತಡೆಯಲು ಸಾಧ್ಯವಿಲ್ಲ. ಎಲ್ಲದಕ್ಕೂ ದೇವರ ಮೊರೆ ಹೋಗಬೇಕೆ ಹೊರತು ಸಮಯವನ್ನೂ ದೂರುವುದು ಸರಿಯಲ್ಲ ಎಂದು ನಯವಾಗಿ ಹೇಳಿದೆ. ಆದರೆ ಬೆಲೆ ಬಾಳುವ ವಸ್ತುಗಳನ್ನು ಕಳೆದು ಕೊಂಡ ಆತ ಮಾತ್ರ ‘ಸಮಯ’ ದ ಪರವಾಗಿ ನಿಂತ ನನ್ನ ನಿಲುವನ್ನು ಒಪ್ಪಿದಂತೆ ಕಾಣಲಿಲ್ಲ.

ಮೇಲೆ ಹೇಳಿದ ರೀತಿಯ ಘಟನೆಗಳನ್ನು ನಾವು ದಿನವೂ ನೋಡುತ್ತಿರುತ್ತೇವೆ, ಕೇಳುತ್ತಿರುತ್ತೇವೆ. ಒಂದರ ಹಿಂದೆ ಒಂದು ಅವಘಡಗಳು ಸಂಭವಿಸಿದರಂತೂ ಕೇಳಬೇಡಿ’ ಟೈಮ್’ ನ ಗೋಳು. ಸಮಯದ ಜನ್ಮ ಜಾಲಾಡುತ್ತಾರೆ. ಪರಿಹಾರ ಕಾಣಲೆಂದು ಜ್ಯೋತಿಷ್ಯರ,  ಮಂತ್ರವಾದಿಗಳ  ಮೊರೆಯೂ ಹೋಗುತ್ತಾರೆ. ತಂತ್ರ ಯಂತ್ರ ಕಟ್ಟಿಸಿ ಕೊಳ್ಳಲು ಎಂದು  ಮತ್ತಷ್ಟು ಕಳೆದುಕೊಳ್ಳುತ್ತಾರೆ. ಆದರೆ ನಮಗೆದುರಾಗುವ ಎಲ್ಲಾ ಪ್ರಾರಬ್ದ ಗಳಿಗೂ ನಿಜವಾಗಿಯೂ ‘ಟೈಮ್’’ ಅಥವಾ ಕೆಟ್ಟ ಘಳಿಗೆ ಕಾರಣವೇ?  

ಕಾಲವನ್ನು  ಸಂವತ್ಸರ ಎಂದು ಕರೆಯುತ್ತಾರೆ. ವತ್ಸರ ಎಂದರೆ ದೇವರು. ಅಂದರೆ ಕಾಲವೇ ದೇವರು. ಸಂವತ್ಸರ ಎಂದರೆ ವರ್ಷ ಎಂದಲ್ಲ. ಪ್ರತೀ ಕ್ಷಣ, ನಿಮಿಷ, ಘಂಟೆಗಳು ಸಂವತ್ಸರವೇ. ಏಕೆಂದರೆ ಈ ಕ್ಷಣ, ನಿಮಿಷ, ಘಂಟೆಗಳಿಂದ ದಿನಗಳು, ತಿಂಗಳುಗಳಾಗಿ ವರ್ಷ ಎಂದೆನ್ನಿಸಿ ಕೊಳ್ಳುತ್ತದೆ. ಅಂದರೆ ನಾವು ನಮಗೆ ಎದುರಾಗುವ ಕಷ್ಟ, ದುಃಖ ದುಮ್ಮಾನಗಳಿಗೆ  ಸಮಯವನ್ನು ಹಳಿದರೆ ದೇವರನ್ನು ತೆಗಳಿದಂತಾಗುತ್ತದೆ, ಅಲ್ಲವೇ?    

ತೃಣಮಪಿ ನಃ ಚಲತಿ. ದೇವನ ಅಪ್ಪಣೆಯಿಲ್ಲದೆ ಹುಲ್ಲೂ ಕೂಡ ಚಲಿಸದು ಎನ್ನುವ ಅರ್ಥದ ಈ ಮಾತು ಇಸ್ಲಾಂ ಧರ್ಮೀಯರ “ಪವಿತ್ರ ಕುರ್’ಆನ್” ನಲ್ಲಿಯೂ ಇದೆ. ಪ್ರತೀ ಕಾರ್ಯವೂ, ಪ್ರತೀ ಘಟನೆಯೂ, ಎಲ್ಲಾ ಒಳ್ಳೆಯ ಮತ್ತು ಕೆಟ್ಟ ಘಟನೆಗಳು ದೇವನ ಅಪ್ಪಣೆಯಿಲ್ಲದೆ ನಡೆಯುವುದಿಲ್ಲ ಎಂದು ಆಸ್ತಿಕರು ಬಲವಾಗಿ ನಂಬುವರು. ಅದರಲ್ಲೂ ಮುಸ್ಲಿಮರಲ್ಲಿ ಈ ನಂಬಿಕೆ ಹೆಚ್ಚು. ಯಾವುದೇ ತೆರನಾದ ಅವಘಡಕ್ಕೂ ಕಾಲವನ್ನಾಗಲಿ, ದುರದೃಷ್ಟ ವನ್ನಾಗಲೀ ಟೀಕಿಸಲು, ಶಪಿಸಲು ಹೋಗದೆ ಎಲ್ಲಾ ದೈವೇಚ್ಛೆ ಎಂದು ಇರುವುದರಲ್ಲೇ ತೃಪ್ತಿ ಕಾಣುತ್ತಾರೆ. ಒಮ್ಮೆ ಪಾಶ್ಚಾತ್ಯ ದೇಶವೊಂದರ ಯಾತ್ರಿಯೊಬ್ಬ (ನೆದರ್ ಲ್ಯಾಂಡ್ಸ್ ನ van der post ಎಂದು ನನ್ನ ನೆನಪು) ಸಹರಾ ಮರುಭೂಮಿಯ ಮುಖಾಂತರ ಪ್ರಯಾಣ ಬೆಳೆಸಿದಾಗ ಮೊರಾಕ್ಕೋ ದೇಶಕ್ಕೆ ಸೇರಿದ ಮರುಭೂಮಿಯಲ್ಲಿ ಒಂದು ದೃಶ್ಯ ಕಾಣಲು ಸಿಗುತ್ತದೆ.  ಮರುಭೂಮಿಯಲ್ಲಿ ವಾಸಿಸುವ ಬೆದೂಯಿನ್ (bedouin) ಬುಡಕಟ್ಟಿನವರು ಒಂದು ಕಡೆ ತಾತ್ಕಾಲಿಕ ಡೇರೆ ಹಾಕಿದ್ದನ್ನು ಈತ ಕಾಣುತ್ತಾನೆ. ಅವರೊಂದಿಗೆ ಹರಟುತ್ತಾ ಇದ್ದಾಗ ಒಮ್ಮೆಗೆ ಈ ಬಿರುಗಾಳಿ ಅಪ್ಪಳಿಸಿ ಕುರಿ, ಕೋಳಿ, ಒಂಟೆ, ಡೇರೆ, ಸಾಮಾನು ಪಾತ್ರೆ ಪಗಡಿ ಎಲ್ಲವನ್ನೂ ಬಾಚಿಕೊಂಡು ಹೋಗಿ ಬಿಡುತ್ತದೆ. ಮರುಭೂಮಿಯ ಬಿರುಗಾಳಿ (sand storm) ಗೊತ್ತೇ ಇದೆಯಲ್ಲಾ. ತನ್ನ ಹಾದಿಗೆ ಅಡ್ಡ ಬರುವ ಯಾವುದನ್ನೂ ಬಿಡದೆ ಬಾಚಿಕೊಂಡು ಹೋಗುವ ಬಿರುಗಾಳಿ. ನಮಗೆ ಪರಿಚಯವಿರುವ ಸುಂಟರ ಗಾಳಿಯಂತೆ. ಸಾವಿರ ಸುಂಟರ ಗಾಳಿ ಕೂಡಿಕೊಂಡು ಧಾಳಿ ಮಾಡಿದರೆ ಹೇಗಿರುತ್ತೋ ಹಾಗಿರುತ್ತದೆ ಮರುಭೂಮಿಯ ಬಿರುಗಾಳಿ. ಸುಮಾರು ಹೊತ್ತಿನ ನಂತರ ಬಿರುಗಾಳಿಯ ಅಬ್ಬರ ನಿಂತ ಮೇಲೆ ಒಂದೇ ಒಂದು ಶಬ್ದವನ್ನೂ ಆಡದೆ, ತುಟಿ ಪಿಟಿಕ್ಕನ್ನದೆ ತಮ್ಮ ಕೆಟ್ಟ ಘಳಿಗೆಯನ್ನು ತೆಗಳದೆ, ಇದೊಂದು ಸಾಮಾನ್ಯ ಘಟನೆ ಎನ್ನುವ ಭಾವದಿಂದ  ಸಿಕ್ಕಿದ್ದೇ ಶಿವ ಎಂದು ಬೀಸಿದ ಬಿರುಗಾಳಿ ಅಳಿದುಳಿಸಿದ ಸಾಮಾನುಗಳನ್ನು ಅತ್ಯಂತ ಶ್ರದ್ಧೆಯಿಂದ, ಜೋಪಾನದಿಂದ, ಸಂಯಮದಿಂದ ಹೆಕ್ಕುತ್ತಿದ್ದನ್ನು ನೋಡಿದ ಈ ಪಾಶ್ಚಾತ್ಯ ದಂಗಾಗಿ ನಿಲ್ಲುತ್ತಾನೆ. ಕೆಲವೇ ಕ್ಷಣಗಳಲ್ಲಿ ತಮ್ಮ ಬದುಕನ್ನೇ ಮೂಲೋತ್ಪಾಟನೆ ಮಾಡಿದ ಬಿರುಗಾಳಿಯನ್ನು ಶಪಿಸದೇ, ಅತ್ಯಂತ ಸಮಯದಿಂದ ಸಹಿಸಿ, ಶಾಂತ ಚಿತ್ತತೆಯಿಂದ ಅಳಿದುಳಿದುದದನ್ನು ಆರಿಸಿ ಕೊಳ್ಳುತ್ತಿದ್ದ ಬೆದೂಯಿನ್ ರನ್ನು ಕಂಡು ಆತನಿಗೆ ತನ್ನ ಕಣ್ಣುಗಳ ನ್ನು ನಂಬಲಾಗಲಿಲ್ಲ. ಅಲ್ಲಿದ್ದ ಒಬ್ಬನಿಗೆ ಈ ಕುರಿತು ಕೇಳಿದಾಗ ಅವನು ಹೇಳಿದ್ದು, ನಮಗೆ ಈ ಸ್ಥಿತಿ ತಂದ ಬಿರುಗಾಳಿಯನ್ನು ನಾನು ಶಪಿಸಿ ಪಡೆಯುವುದಾದರೂ ಏನನ್ನು? ಹೋದ ಸಾಮಾನುಗಳು, ಆದ ನಷ್ಟ, ತಿರುಗಿ ಬರುತ್ತದೆಯೇ? ಹೆಚ್ಚು ವಿಳಂಬ ಮಾಡದೇ “ಅಲ್ಹಂದು ಲಿಲ್ಲಾಹ್’” (ದೇವರಿಗೆ ಸರ್ವಸ್ತುತಿ) ಎಂದು ಇರುವುದನ್ನು ಆರಿಸಿ ಕೊಂಡು ಮುಂದಿನ ದಾರಿ ನೋಡುವುದು ತಾನೇ ಜಾಣತನ ಎಂದು ಆತನಿಗೆ ಮರು ಪ್ರಶ್ನೆ ಹಾಕಿದಾಗ ಬಿಳಿಯ ಆ ಪ್ರಶ್ನೆಗೆ ಉತ್ತರ ಕಾಣದೆ ತನ್ನ ದೇಶದಲ್ಲಾಗಿದ್ದರೆ ಏನು ಮಾಡುತ್ತಿದ್ದರು ಎಂದು ಯೋಚಿಸುತ್ತಾ ತನ್ನ ದಾರಿ ಹಿಡಿಯುತ್ತಾನೆ.  

ಎಂಥದ್ದೇ ಗಂಭೀರವಾದ, ಕ್ಲಿಷ್ಟಕರವಾದ, ದಬ್ಬಾಳಿಕೆಗೆ ಒಳಗಾದಾಗ, ಮಾನಸಿಕ ಕ್ಲೇಶ, ದೈಹಿಕ ನೋವು, ಅಗಲಿಕೆ ಬಂದಾಗಲೂ ಅರಬರು ಹೇಳುವುದು “ಅಲ್ಹಂದು ಲಿಲ್ಲಾಹ್”, ಅಥವಾ “ನಿನ್ನಿಂದಲೇ ಬಂದೆವು, ನಿನ್ನಲ್ಲಿಗೇ ನಾವು ಮರಳುವೆವು, (ಇನಾ ಲಿಲ್ಲಾಹಿ ವಯಿನ್ನಾ ಇಲೈಹಿ ರಾಜಿಊನ್) ಎನ್ನುವ ಮಾತನ್ನು ಹೇಳುತ್ತಾರೆ. ವಿಶೇಷವಾಗಿ ನಿಧನದ ವಾರ್ತೆ ಕೇಳಿದಾಗ ಈ ಮಾತನ್ನು ಹೇಳಲೇ ಬೇಕು. ಅಯ್ಯೋ ಪಾಪ, ಯಾವಾಗ ಸತ್ರು, ಪಾಪ, ಎಷ್ಟು ಚೆನ್ನಾಗಿದ್ರು, ಚಿಕ್ಕ ವಯಸ್ಸು, ಸ್ವಲ್ಪ ಮೊದಲು ತಾನೇ  ಮಾತನಾಡಿಸಿದ್ದೆ…. ಎಂದೆಲ್ಲಾ ಬಡಬಡಿಸುವ ಗೋಜಿಗೆ ಅರಬರು ಹೋಗುವುದಿಲ್ಲ. ಏಕೆಂದರೆ ಎಲ್ಲವೂ ವಿಧಿಯ ಕೈಯ್ಯಲ್ಲಿ, ಆ ವಿಧಿಯನ್ನು ಕಾರ್ಯಗತ ಗೊಳಿಸುವವನೇ ಮೇಲೆ ಕೂತಿರುವ ಆ ಪರಮಾತ್ಮ. ಮತ್ತೊಂದು ಹದೀಸ್ ಸೂಕ್ತದಲ್ಲಿ “ಆದಮನ (ಆದಿ ಮಾನವ) ಮಗ ತಪ್ಪು ತಿಳಿದಿದ್ದಾನೆ. ಘಳಿಗೆಯನ್ನು ಅವನು ಶಪಿಸುತ್ತಾನೆ ಆದರೆ ನಾನೇ ಆಗಿದ್ದೇನೆ ಆ ಘಳಿಗೆ. ಒಳಿತು ಮತ್ತು ಎಲ್ಲವೂ ನನ್ನ ಕೈಗಳಿಂದಲೇ ಬರುತ್ತವೆ. ಮತ್ತು ಹಗಲನ್ನು ಹಿಂಬಾಲಿಸುವ ಇರುಳು ಸಹ ನನ್ನಿಂದಲೇ” ಎಂದು ದೇವರು ಹೇಳುತ್ತಾನೆ.       

ನಮ್ಮ ಅಜಾಕರೂಕತೆಯಿಂದ ಉಂಟಾಗುವ ಅನಾಹುತಗಳಿಗೆ ಸುಖಾ ಸುಮ್ಮನೆ ಸಮಯವನ್ನು ಶಿಲುಬೆಗೆ ಏರಿಸದೆ ಹೆಚ್ಚು ಜಾಗರೂಕರಾಗೋದೇ ಲೇಸು ಅಲ್ಲವೇ?

ಮೊಬೈಲ್ ಕಂಪೆನಿಗಳ ಮೋಸದ ವ್ಯಾಪಾರ

ನಮ್ಮ ದೇಶ ಮೊಸಗಾರಿಕೆಗೆ ಹೆಸರುವಾಸಿ. ಇದನ್ನು ಹೇಳುವುದಕ್ಕೋ, ಒಪ್ಪಿಕೊಳ್ಳುವುದಕ್ಕೋ ಯಾವ ಡೋಂಗಿ  ಅಭಿಮಾನವೂ ಅಡ್ಡ ಬರಬೇಕಿಲ್ಲ. ಭಾರತದಿಂದ ಹೊರಗಿರುವ, ವಿದೇಶದಲ್ಲಿ ದುಡಿಯುವ ಜನಕ್ಕೆ ಇಲ್ಲಿನ ಮೋಸ ಬಹಳ ಬೇಗನೆ ತಿಳಿಯುತ್ತದೆ. mobile ಬಗ್ಗೆ ಹೇಳಿದರೆ roaming, std, incoming charge, outgoing, charge, pulse rate, minute rate ತರಾವರಿ ಟೋಪಿಗಳು. ಕೆಲವೊಮ್ಮೆ ನಿಮಗೆ ತಿಳಿಯದಂತೆ ನಿಮ್ಮ ಖಾತೆಯಿಂದ ಹಣ ಮಾಯ. ನಮ್ಮ ಭೂ ಸಂಪತ್ತು, ಖನಿಜ ಸಂಪತ್ತು, ವನ ಸಂಪತ್ತು ಹೀಗೇ ಕಣ್ಣಿಗೆ ಕಂಡ ಸಂಪತ್ತೆನ್ನೆಲ್ಲಾ ರಾಜಕಾರಣಿಗಳ ಜೊತೆ ಸೇರಿ ಹಗಲು ದರೋಡೆ ಮಾಡಿದ ಮಹನೀಯರುಗಳು ನಮ್ಮ ಜೇಬಿನಲ್ಲೋ, ಮೊಬೈಲ್ ನಲ್ಲೋ ಅಳಿದುಳಿದ ಚಿಕಾಸುಗಳಿಗೂ ಕೈ ಹಾಕುತ್ತಿದ್ದಾರೆ ಎಂದರೆ ನಾಚಿಕೆ ಆಗುತ್ತದೆ.

ಯೋಚಿಸಿ, ಸುಮಾರು ೬೦ -೭೦ ಕೋಟಿ ಮೊಬೈಲ್ ಕನೆಕ್ಷನ್ ಗಳಿಂದ ದಿನಕ್ಕೆ ಐದೋ ಹತ್ತು ಪೈಸೆಯೂ ಕದ್ದರೂ ಸಾಕಲ್ಲವೇ? ರಿಂಗ್ ಟೋನ್ ವ್ಯಾಪಾರದ ಜೊತೆಗೇ ಹಾದರ ಬೇರೆ. ಹುಡಗಿಯರ ಮಾತನ್ನಾಡಿಸುವ ಸೌಕರ್ಯ ಕೂಡಾ.

ಈಗ ದೇಶವನ್ನು ೨೨ ವೃತ್ತಗಳನ್ನಾಗಿ ವಿಂಗಡಿಸಿ ರೋಮಿಂಗ್ ಅನ್ವಯ ಮಾಡಿದ್ದರು. ಅದನ್ನು ತೆಗೆದು ಹಾಕಿ ಇಡೀ ದೇಶವೇ ಒಂದು ವಲಯವನ್ನಾಗಿ ಘೋಷಿಸುತ್ತಾರಂತೆ. ಅಥವಾ ಧನಪಿಶಾಚಿ ಕಂಪೆನಿಗಳ ಧನ ದಾಹ ತಣಿಸಲು ಕನಿಷ್ಠ ದೇಶವನ್ನು ನಾಲ್ಕು ವಿಭಾಗಗಳನ್ನಾಗಿ ವಿಂಗಡಿಸುತ್ತಾರಂತೆ.  ಇನ್ನು ಇದರ ವಿರುದ್ಧ ಮೊಬೈಲ್ ಕಂಪೆನಿಗಳು, ಅವರ ಚೇಲಾಗಳು ನ್ಯಾಯಾಲಯದ ಕಟ್ಟೆ ಹತ್ತಿ ಈ ನಿಯಮ ನೆನೆಗುದಿಗೆ ಬೀಳುವಂತೆ  ಮಾಡುತ್ತಾರೋ ಏನೋ.

ಬಹುಪತ್ನಿತ್ವ ಮತ್ತು popular perception

ಬಹುಪತ್ನಿತ್ವ ಎಂದ ಕೂಡಲೇ popular perception ಮುಸ್ಲಿಮರು ಒಂದಕ್ಕಿಂತ ಹೆಚ್ಚು ಮದುವೆ ಯಾಗುವವರು ಎಂದು. ಈ ತಪ್ಪು ತಿಳಿವಳಿಕೆಗೆ ಜನರ ತಿಳಿಗೇಡಿತನಕ್ಕಿಂತ ಮಾಧ್ಯಮಗಳ ಮತ್ತು ಹಗೆ ವರ್ತಕ ರಾಜಕಾರಣಿಗಳ ಕುಚೋದ್ಯದ ಅಪಪ್ರಚಾರ ಕಾರಣ ಎನ್ನಬಹುದು. ಹೌದು ಇಸ್ಲಾಂ ಬಹುಪತ್ನಿತ್ವ ವನ್ನು ಅನುಮತಿಸುತ್ತದೆ ಷರತ್ತುಗಳೊಂದಿಗೆ. ಈ ಶರತ್ತುಗಳೇ ನನ್ನಂಥ ಮತ್ತು ಶೇಕಡಾ 90 ಕ್ಕಿಂತ ಹೆಚ್ಚು ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಹೆಂಡಿರನ್ನು ಹೊಂದಲು ಇಷ್ಟ ಪಡದೆ ಇರುವುದು. ದೇವ ವಾಣಿ “ಪವಿತ್ರ ಕುರ್’ ಆನ್” ನಲ್ಲಿ ವಿಶ್ವಾಸ ಇಡುವ ಮುಸ್ಲಿಮನೊಬ್ಬ ದೇವರು ವಿಧಿಸಿದ ಶರತ್ತುಗಳನ್ನು ಅವಗಣಿಸಿ ತನ್ನ ಶಾರೀರಿಕ ತೃಷೆಗಾಗಿ ಪಾಪವನ್ನು ತನ್ನ ಮೇಲೆ ಹೇರಿಕೊಳ್ಳಲಾರ. ಹಾಗೆಯೇ ಬಹುಪತ್ನಿತ್ವ ಇಸ್ಲಾಮಿನ prerogative ಮಾತ್ರ ಅಲ್ಲ ಎಂದು ಈ ಕುರಿತು ನಡೆದ ಅಧ್ಯಯನಗಳು ಸ್ಥಿರೀಕರಿಸುತ್ತವೆ.

ಹಿಂದೂ ಧರ್ಮೀಯರ ಬೌಧಾಯನ ಧರ್ಮಶಾಸ್ತ್ರದಲ್ಲಿ ಬ್ರಾಹ್ಮಣರು ನಾಲ್ಕು ಹೆಂಡಿರನ್ನೂ, ಕ್ಷತ್ರಿಯ ಮೂರು, ವೈಶ್ಯ ಎರಡು ಮತ್ತು ಶೂದ್ರ ಒಂದು ಹೆಣ್ಣನ್ನು ಮದುವೆಯಾಗಬಹುದು. ಭಗವಾನ್ ಶ್ರೀ ಕೃಷ್ಣನೂ, ಮತ್ತು ಪಾಂಡವರೂ ಬಹುಪತ್ನಿತ್ವವನ್ನು ಆಚರಿಸಿದವರು.      

ಕನ್ನಡದ ಸುಪ್ರಸಿದ್ಧ ವೆಬ್ ತಾಣವೊಂದರಲ್ಲಿ ಒಬ್ಬರು “ಮೈಸೂರು ರಾಜರುಗಳಿಗೆ ಮಕ್ಕಳಿಗಿಂತ ಹೆಂಡತಿಯರೇ ಜಾಸ್ತಿ!” ಶೀರ್ಷಿಕೆಯಡಿ ಮೈಸೂರಿನ ರಾಜ ಮನೆತನ ಬಹುಪತ್ನಿತ್ವವನ್ನು ಆಚರಿಸುತ್ತಿತ್ತು ಎಂದು ಬರೆದಿದ್ದರು. . ಅದರ ತುಣುಕೊಂದನ್ನು ಕೆಳಗೆ ನೀಡಿದ್ದೇನೆ.

ಮೈಸೂರು ಅರಮನೆಯಲ್ಲಿ ಕಂಚಿನ ಚೂರ್ಣಿಕೆಯೊಂದಿದೆ. ಅದರ ೨೨ ಎಲೆಗಳ (ಪಟಗಳ) ಮೇಲೆ ಆರಂಭದ ಆದಿ ಯದುರಾಜನಿಂದ ಹಿಡಿದು ಮುಮ್ಮಡಿ ಕೃಷ್ಣರಾಜನವರೆಗೆ ಇಪ್ಪತ್ತೆರಡು ರಾಜರುಗಳ ಹೆಸರು, ಹುಟ್ಟಿದ ದಿನಾಂಕ, ಪಟ್ಟಕ್ಕೆ ಬಂದ ದಿನಾಂಕ, ಆಡಳಿತಾವಧಿ ಎಲ್ಲವನ್ನೂ ಹೇಳಲಾಗಿದೆ. ಜೊತೆಗೆ ಅವರಿಗಿದ್ದ ಹೆಂಡತಿಯರ ಸಂಖ್ಯೆ ಹಾಗೂ ಮಕ್ಕಳ ಸಂಖ್ಯೆಯನ್ನೂ ದಾಖಲಿಸಲಾಗಿದೆ. ಇಡೀ ಚೂರ್ಣಿಕೆಯ ಬರಹ “ಎಫಿಗ್ರಾಫಿಯಾ ಕರ್ನಾಟಿಕ” ಸಂಪುಟ ೫ ರಲ್ಲಿ ಪ್ರಕಟವಾಗಿದೆ. ಅದರ ಇಂಗ್ಲೀಷ್ ಅನುವಾದವೂ ಅಲ್ಲೇ ಪ್ರಕಟವಾಗಿದೆ.

ಈ ಚೂರ್ಣಿಕೆಯನ್ನು ಸಿದ್ಧ ಪಡಿಸಿದ ಕಲಾವಿದ ತಿಪ್ಪಣ್ಣ ಎನ್ನುವ ವ್ಯಕ್ತಿ.

ಮೈಸೂರು ರಾಜರುಗಳು ಮತ್ತು ಅವರ ಸಂಸಾರ:

ದೊಡ್ಡ ದೇವರಾಜ ವೊಡೆಯರ್ – 53 ಹೆಂಡಿರು 11 ಮಕ್ಕಳು

ಚಿಕ್ಕ ದೇವರಾಜ ವೊಡೆಯರ್ – 22 ಹೆಂಡಿರು, 2 ಮಕ್ಕಳು

ಕಂತೀರವ ಮಹಾರಾಜ ವೊಡೆಯರ್ – 3 ಹೆಂಡಿರು, 5 ಮಕ್ಕಳು

ವಮ್ಮಡಿ ದೊಡ್ಡ ಕೃಷ್ಣ ರಾಜ ವೊಡೆಯರ್ – 45 ಹೆಂಡಿರು, 2 ಮಕ್ಕಳು

ವಮ್ಮಡಿ ಚಾಮರಾಜ ವೊಡೆಯರ್ – 3 ಹೆಂಡಿರು, ಮಕ್ಕಳಿಲ್ಲ

ಇಮ್ಮಡಿ ಕೃಷ್ಣರಾಜ ವೊಡೆಯರ್ – 8 ಹೆಂಡಿರು, 9 ಮಕ್ಕಳು

ಮುಮ್ಮಡಿ ಖಾಸಾ ಚಾಮರಾಜ ವೊಡೆಯರ್ – 10 ಹೆಂಡಿರು ಮತ್ತು 4 ಮಕ್ಕಳು

ಮುಮ್ಮಡಿ ಶ್ರೀ ಕೃಷ್ಣ ರಾಜ ವೊಡೆಯರ್ ಬಹಾದುರ್ – 20 ಹೆಂಡಿರು

ಚಾಮರಾಜ ವೊಡೆಯರ್ – 65 ಹೆಂಡಿರು

ಬೆಟ್ಟ ಚಾಮರಾಜ ವೊಡೆಯರ್ – 13 ಹೆಂಡಿರು, 6 ಮಕ್ಕಳು

ರಾಜ ವೊಡೆಯರ್  – 8 ಹೆಂಡಿರು, 6 ಮಕ್ಕಳು

ಇಮ್ಮಡಿ ರಾಜ ವೊಡೆಯರ್ – 19 ಹೆಂಡಿರು.

ಮೇಲೆ ಹೇಳಿದ ಅರಸರು ವಿವಿಧ ಕಾರಣಗಳಿಗಾಗಿ ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಇಟ್ಟು ಕೊಂಡಿರಬಹುದು ಮತ್ತು ಅವರುಗಳು ಬದುಕಿದ ಕಾಲದಲ್ಲಿ ಹಾಗೆ ಬಹುಪತ್ನೀ ವೃತಸ್ಥರಾಗುವುದು ರೂಢಿಯೂ ಇದ್ದಿರಬೇಕು. ಅರಸರು ಈ ರೀತಿ ಮಾಡಿದಾಗ ಸಮಾಜದ ಪ್ರತಿಷ್ಟಿತ ಗಣ್ಯರೂ ಸಹ 20, 30 ಅಲ್ಲದಿದ್ದರೂ 2, 3 ಪತ್ನಿಯರನ್ನಾದರೂ ಹೊಂದಿರುವ ಸಾಧ್ಯತೆ ಹೆಚ್ಚು ಎಂದೇ ಹೇಳಬಹುದು. ಹಾಗಾಗಿ ಬಹುಪತ್ನಿತ್ವ ಆಗಿನ ಕಾಲದಲ್ಲಿ ubiquitous ಎನ್ನಬಹುದು.  

ಆಫ್ರಿಕಾದ swaziland ದೇಶದ ರಾಜ ಪ್ರತೀ ವರ್ಷವೂ ಸುರ ಸುಂದರ ಕನ್ಯೆಯರ ಮೇಳ ಏರ್ಪಡಿಸಿ ತನಗೆ ಚೆಂದುಳ್ಳಿಯಾಗಿ ಕಂಡ ಚಕೋರಿ ಯನ್ನು ಮದುವೆಯಾಗಿ ತನ್ನ ಚಂದ್ರಮಂಚದ ಸಂಗಾತಿಯರ ಸಾಲಿಗೆ ಸೇರಿ ಕೊಳ್ಳುತ್ತಾನಂತೆ. ಅವನ ಅದೃಷ್ಟಕ್ಕೆ ನಾವು ಹಲುಬಿ ಕರುಬಿ ಫಲವಿಲ್ಲ ಎನ್ನಿ, ಏಕೆಂದರೆ ಇರುವ ಒಬ್ಬ ಹೆಂಡತಿಯ ಆಸೆ, ಅಭಿಲಾಷೆ, ಬೇಕು ಬೇಡಗಳನ್ನು ಪೂರೈಸುವತ್ತ ನಾವು ನಡೆಸುವ ಕುಸ್ತಿ ಕಸರತ್ತೇ ಸಾಕು ಬೇಕಾಗಿರುವಾಗ  ಮತ್ತೊಂದು, ಮಗುದೊಂದು, ಇನ್ನೊಂದು ….ಹೀಗೆ ಹೆಂಡತಿಯರನ್ನು ನಮ್ಮ ಗೋಣಿನ ಸುತ್ತಾ ಪೋಣಿಸುತ್ತಾ ಹೋದರೆ  ಒಂದು ದಿನ ಅದೇ ನಮಗೆ ಉರುಳಾಗಿ ನಮ್ಮ ಅವಸಾನಕ್ಕೆ ಕಾರಣವಾಗಬಹುದು ಎನ್ನುವುದರಲ್ಲಿ ಸಂಶಯ ಬೇಡ, ಏನಂತೀರ?

ಯೋಗಾಸನ ಪೈಶಾಚಿಕವಂತೆ

ಯೋಗಾಸನ ಪೈಶಾಚಿಕವಂತೆ, ಹೀಗಂತ decree ಹೊರಡಿಸಿದವರು ಅಮೆರಿಕೆಯ ಪಾದ್ರಿಯೊಬ್ಬರು. ಸಿಯಾಟ್ಲ್ ರಾಜ್ಯದ ಆ ಪಾದ್ರಿಗೆ ಯೋಗಾಸನವು ಪದ್ಮಾಸನ ಹಾಕಿ ಕೂತ ಪಿಶಾಚಿಯಂತೆ ತೋರುತ್ತದಂತೆ. ಯೋಗ ತರಗತಿಗೆ ನೊಂದಾಯಿಸಿ ಕೊಳ್ಳುವುದರ ಮೂಲಕ ಒಂದು ಪುಟ್ಟ ಪೈಶಾಚಿಕ ತರಗತಿಗೂ ಸೇರುತ್ತಿದ್ದೀರಿ ಎಂದು ಕ್ರೈಸ್ತ ಧರ್ಮೀಯರಿಗೆ ಕಿವಿ ಮಾತು ಹೇಳಿದ R Albert Mohler Jr, ಕೆಂಟಕಿಯ ದಕ್ಷಿಣ ಬ್ಯಾಪ್ಟಿಸ್ಟ್ ಧಾರ್ಮಿಕ ಸಂಸ್ಥೆಯೊಂದರ ಅಧ್ಯಕ್ಷ. ಯೋಗದ ವೇಳೆ ಪಠಿಸಲ್ಪಡುವ ಮಂತ್ರಗಳು ಸಂಸ್ಕೃತ ದ್ದೂ ಮತ್ತು ಕ್ರೈಸ್ತ ಧರ್ಮದ ಆದರ್ಶಗಳಿಗೆ ವಿರೋಧಿಯೆಂದೂ ಹೇಳಿಕೆ ನೀಡಿದ ಈ ಪಾದ್ರಿ ಅಮೇರಿಕಾ ಹೇಗೆ ದಿನೇ ದಿನೇ ಕ್ರೈಸ್ತ ಮೂಲಭೂತವಾದದ ತನಗರಿವಿಲ್ಲದಂತೆ ಜಾರುತ್ತಿದೆ ಎನ್ನುವುದಕ್ಕೆ ನಿದರ್ಶನವಾದರು. ಕೆಲ ವಾರಗಳ ಹಿಂದೆ ಪವಿತ್ರ “ಕುರ್’ ಆನ್” ಗ್ರಂಥವನ್ನು ಬಹಿರಂಗವಾಗಿ ಸುಡಲು ಕರೆ ನೀಡಿದ್ದ ಪಾದ್ರಿಯೊಬ್ಬ ವಿಶ್ವದಾದ್ಯಂತ ಕೇಳಿ ಬಂದ ಪ್ರತಿಭಟನೆಗೆ ಮಣಿದು ಹಿಂಜರಿದ. ಯೋಗದ ಬಗ್ಗೆ ಮಲೇಷ್ಯಾದ ಮುಸ್ಲಿಂ ವಿಧ್ವಾಂಸರೂ ಅಪಸ್ವರ ಎತ್ತಿದ್ದರು, ಅದು ಇಸ್ಲಾಮಿನ ಅಡಿಗಲ್ಲಾದ ಏಕದೇವೋಪಾಸನೆಯ ತತ್ವಗಳಿಗೆ ವಿರುದ್ಧ ಎಂದು. ಆದರೆ ಇದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು ಯಾವುದೇ ವ್ಯತಿರಿಕ್ತ ಪರಿಣಾಮ ಬೀರಲಿಲ್ಲ. ನನ್ನ ಭಾವ ಮತ್ತು ನನ್ನ ಅತ್ತೆ (ಸೋದರ ಮಾವನ ಪತ್ನಿ) ಯೋಗ ದ ಅಭಿಮಾನಿಗಳು. ಇಸ್ಲಾಂ ತತ್ವದ ಪರಿಧಿಯ ಒಳಗಿದ್ದು ಕೊಂಡೆ ಯೋಗದ ಪ್ರಯೋಜನ ಪಡೆಯುತ್ತಿದ್ದಾರೆ. ಇದೇ ರೀತಿಯ ಧಾರ್ಮಿಕ ಅಸಹಿಷ್ಣುತೆ ಯ ಮತ್ತೊಂದು ಉದಾಹರಣೆ ಕೇರಳ ರಾಜ್ಯದಲ್ಲಿ ಕಾಣಲು ಸಿಕ್ಕಿತು ಮೊನ್ನೆ. ಅತಿ ಹೆಚ್ಚು ಸಾಕ್ಷರತೆ ಇರುವ, ರಾಜಕೀಯ ಪ್ರಬುದ್ಧತೆಯಲ್ಲಿ ದೇಶದ ಎಲ್ಲಾ ರಾಜ್ಯಗಳಿಗಿಂತ ಮುಂಚೂಣಿಯಲ್ಲಿರುವ ಕೇರಳದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸಕ್ಕೆ ಹಚ್ಚುವ ಧಾರ್ಮಿಕ ಪರಂಪರೆಯಿದೆ. ಅದಕ್ಕೆ “ವಿದ್ಯಾರಂಭಂ” ಎಂದು ಕರೆಯುತ್ತಾರೆ. ಸಾವಿರಾರು ಮಕ್ಕಳು ಈ ಸಮಾರಂಭದಲ್ಲಿ ಪಾಲುಗೊಂಡು ಅಕ್ಷರಾಭ್ಯಾಸಕ್ಕೆ ತಮ್ಮ ಮೊದಲ ಹೆಜ್ಜೆ ಇಡುತ್ತಾರೆ. ಈ ಸಮಾರಂಭಕ್ಕೆ ಜಾತಿ ಮತಗಳ ಬೇಧ ಭಾವ ಇಲ್ಲ. ಇರಲಿಲ್ಲ ಈ ವರ್ಷದವರೆಗೂ. ಸಬ್-ಇನ್ಸ್ಪೆಕ್ಟರ್ ಒಬ್ಬರ ಎರಡೂವರೆ ವರ್ಷದ ಪುಟಾಣಿ ಸಹ ಉತ್ಸಾಹದಿಂದ ಈ ಕಾರ್ಯಕ್ರಮದಲ್ಲಿ ಪಾಲುಗೊಳ್ಳಲು ಬಂದಿದ್ದ. ಆತ ಹಿಂದೂ ಅಲ್ಲ ಎಂದು ಹೇಳಿ ಅವನಿಗೆ ಪ್ರವೇಶ ನಿರಾಕರಿಸಲಾಯಿತು. ಓರ್ವ ಇಸ್ಲಾಂ ಧರ್ಮೀಯರಾದ ಕಾರಣ ಹುಡುಗನ ಪಾಲಕರಿಗೆ ಈ ಸಮಾರಂಭದಲ್ಲಿ ಪಾಲುಗೊಳ್ಳಲು ಸಾಧ್ಯವಾಗಲಿಲ್ಲ. “ವಿದ್ಯಾರಂಭಂ” ಸಮಾರಂಭ ನಡೆಯುವ ಸ್ಥಳವನ್ನು “ಇಲ್ಲಂ” ಎಂದು ಕರೆಯುತ್ತಾರೆ ಮಲಯಾಳಂ ಭಾಷೆಯಲ್ಲಿ, ಮತ್ತು “ಇಲ್ಲಂ” ಸಹ ದೇವಸ್ಥಾನದ ಒಂದು ಅಂಗ ಎಂದು ಕುಂಟು ನೆಪ ಒಡ್ಡಿ ಈ ಪುಟಾಣಿಗೆ ಪ್ರವೇಶ ನಿರಾಕರಿಸಲಾಯಿತಂತೆ. ಈ ಸುದ್ದಿ ಬಂದಿದ್ದ ಆಮಂತ್ರಿತ ಗಣ್ಯರಿಗೆ ತಿಳಿದು ಸಮಾರಂಭಕ್ಕೆ ಬಂದಿದ್ದ ಖ್ಯಾತ ಲೇಖಕ ಸಿ. ವಾಸುದೇವನ್ ಈ ತಾರತಮ್ಯವನ್ನು ಖಂಡಿಸಿ “ಇಲ್ಲಂ” ಆವರಣದ ಹೊರಗೆ ಈ ಮುಸ್ಲಿಂ ಹುಡುಗನಿಗೆ ಅಕ್ಷರಾಭ್ಯಾಸಕ್ಕೆ ಹಚ್ಚಿದರು. ಜಗತ್ತು ಯಾವ ರೀತಿ ದಿನೇ ದಿನೇ ಅಸಹಿಷ್ಣುತೆ ಕಡೆ ವಾಲುತ್ತಿದೆ, ಜನರ ಮಧ್ಯೆ ಕಂದಕ ಸೃಷ್ಟಿಸುತ್ತಿದೆ ಎಂದು ಶಾಂತಿ ಪ್ರಿಯ ಜನತೆ ಕಳವಳ ಪಡಲು ಮೇಲಿನ ಉದಾಹರಣೆಗಳೇ ಸಾಕೇನೋ.