Ramadan

This picture is of an old man reciting Holy Qur’an in Srinagar, kashmir, India.

It is Ramadan now and during this month the Holy Qur’an was revealed to prophet Muhammad, peace be upon him. I am on my nephew’s computer which doesnt have kannada font. I will turn this text and add some more in kannada when I get on my laptop. Till then, enjoy this pic and ponder -))

pic courtesy: http://www.washingtonpost.com/blogs/blogpost/post/koran-recitation-being-done-on-twitter-for-ramadan-verse-by-verse/2011/08/02/gIQAVxBTpI_blog.html

ಸುಂದರ ಟಾಸ್ಮೆನಿಯಾ

ಸ್ಫೂರ್ತಿದಾಯಕ ದ್ವೀಪ ಎಂದು ಕರೆಯುತ್ತಾರೆ ಆಸ್ಟ್ರೇಲಿಯಾದ ಟಾಸ್ಮೆನಿಯಾವನ್ನು. ವಿಸ್ತೀರ್ಣದಲ್ಲಿ ಪ್ರಪಂಚದ ಆರನೇ ಅತಿ ದೊಡ್ಡ ರಾಷ್ಟ್ರವಾದ ಆಸ್ಟ್ರೇಲಿಯಾದ ಒಂದು ರಾಜ್ಯವೂ ಹೌದು ಟಾಸ್ಮೆನಿಯಾ. ನಾನು ಸೌದಿ ಅರೇಬಿಯಾದ ಅಲ್-ಖೋಬರ್ ನಗರದಲ್ಲಿದ್ದಾಗ ಬಹಳಷ್ಟು ಬಿಳಿಯರು ನನ್ನ ಗೆಳೆಯರಾಗಿದ್ದರು. ಆಸ್ಟ್ರೇಲಿಯಾ, ಅಮೇರಿಕಾ, ಕೆನಡಾ, ಬ್ರಿಟನ್, ಐರ್ಲೆಂಡ್ ಮೂಲದವರಾದ ಇವರೊಂದಿಗೆ ಹರಟುವುದೇ ಒಂದು ಅನುಭವ. ಆಸ್ಟ್ರೇಲಿಯಾದ ಪ್ರಮುಖ ಭೂ ಭಾಗ (mainland) ದವರು ಟಾಸ್ಮೆನಿಯಾದವರನ್ನು ಅವರ ಭೂಪಟದ ಆಕಾರದ ಬಗ್ಗೆ ಅಶ್ಲೀಲ ವಾಗಿ ಜೋಕ್ ಮಾಡಿ ನಗುತ್ತಾರೆ. ಟಾಸ್ಮೆನಿಯಾದ ಭೂಪಟ ಯೋನಿಯಾಕೃತಿ ಯಾಗಿದ್ದು ನಾವು ಅವರನ್ನು tassie ಗಳು ಎಂದು ತಮಾಷೆ ಮಾಡುತ್ತೇವೆ ಎಂದು ಒಬ್ಬ ಹೇಳಿ ನಕ್ಕಿದ್ದ.

ನನ್ನ ಹಳೇ ಸೇತುವೆ ಬ್ಲಾಗ್ ನ ಬ್ಯಾನರ್ ಚಿತ್ರವನ್ನು ಬದಲಿಸಲು ಎಂದು ನನ್ನ picture folder ತೆರೆದಾಗ ಟಾಸ್ಮೆ ನಿಯಾದ ಸುಂದರವಾದ ಸಮುದ್ರ ತೀರದ ಚಿತ್ರವನ್ನು ಸೇವ್ ಮಾಡಿ ಇಟ್ಟುಕೊಂಡಿದ್ದೆ. ಈ ತೀರವನ್ನು wineglass bay ಎಂದು ಕರೆಯುತ್ತಾರೆ. ಈ ಚಿತ್ರವನ್ನೂ ಹಾಕಿದ್ದೇನೆ ನೋಡಿ.

ಈ “ಕೋಟ್” ನಿಮ್ಮ ಕೋಟಿನ ಕಿಸೆಗೆ ಬಿಟ್ಕಳಿ

ಮೇಲಿನ quote ಅನ್ನು ತಮ್ಮ ಅವಗಾಹನೆಗೆ ತರುತ್ತಿದ್ದೇನೆ.

ಹಿಂದೆಂದಿಗಿಂತ ಈಗ ಮಾಧ್ಯಮಗಳ ಹಾವಳಿ ಹೆಚ್ಚಿರೋದ್ರಿಂದ ‘caveat emptor’ ಎನ್ನುವ ಎಚ್ಚರಿಕೆಯೊಂದಿಗೆ ಸೇತ್ಮೆ ಮೇಲೆ ತಗುಲಿ ಹಾಕಿದ್ದೇನೆ. use it or lose it.

ಜಗವ ನಿಯಂತ್ರಿಸುವ ಕೋಣೆ

ಮೇ ತಿಂಗಳ ಮೊದಲ ವಾರದಲ್ಲಿ ವಿಶ್ವದ ಕುಖ್ಯಾತ ಭಯೋತ್ಪಾದಕ ಎಂದು ಕರೆಯಲ್ಪಡುವ ಬಿನ್ ಲಾದೆನ್ ನನ್ನು ಅಮೇರಿಕಾ ಪಾಕಿಸ್ತಾನದ ಸೇನಾ ನಗರ ( garrison town ) ಅಬೊಟ್ಟಬಾದ್ ನಲ್ಲಿ ವಧಿಸಿ ಆತನ ಶವವನ್ನು ಅರಬ್ಬೀ ಸಮುದ್ರಕ್ಕೆ ಎಸೆದು ತನ್ನ ತಂಟೆಗೆ ಬಂದವರು ಪ್ರಪಂಚದ ಯಾವುದೇ ಮೂಲೆಯಲ್ಲಿ ಅಡಗಿದ್ದರೂ ಬಲಿ ಹಾಕುವೆವು ಎನ್ನುವ ಸ್ಪಷ್ಟ ಸಂದೇಶವನ್ನು ವಿಶ್ವಕ್ಕೆ ರವಾನಿಸಿತು. ಈ ವಧೆಯೊಂದಿಗೆ ಅಮೆರಿಕನ್ನರು ನಿರಾಳ ಭಾವ (sense of closure) ಅನುಭವಿಸಿ ಖುಷಿ ಪಟ್ಟರು. ಬಿನ್ ಲಾದೆನ್ ನನ್ನು ಬಲಿ ಹಾಕುವ ಕಾರ್ಯಾಚರಣೆಯ ಉಸ್ತುವಾರಿಯನ್ನು ಅಲ್ಲಿನ ಅಧ್ಯಕ್ಷ ಬ್ಯಾರಕ್ ಒಬಾಮಾ ಖುದ್ದು ವಹಿಸಿದ್ದರು ಅವರೇ ಖುದ್ದಾಗಿ ಹೇಳಿದ್ದರು. ಅವರ ವೈಯಕ್ತಿಕ ನಿರ್ದೇಶನದ ಮೇಲೆ ನಾವಿಕ ಸೇನೆಯ ವಿಶೇಷ ಪಡೆಯ ‘ಸೀಲ್-೬’ ಕಮಾಂಡೋಗಳು ಈ ಸಾಹಸೀ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ತಿ ಗೊಳಿಸಿದರು. ನೀರವ ರಾತ್ರಿಯಲ್ಲಿ ಸುಮಾರು ನಾಲ್ಕು ಘಂಟೆಗಳ ಕಾಲ ನಡೆದ ಕಾರ್ಯಾಚರಣೆ ಯನ್ನು ಅಮೆರಿಕೆಯ ಅಧ್ಯಕ್ಷ, ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಮತ್ತು ಮೂರ್ನಾಲ್ಕು ಇತರೆ ಹಿರಿಯ ಅಧಿಕಾರಿಗಳು ಶ್ವೇತ ಭವನದ situation room ( ಪರಿಸ್ಥಿತಿ ಕೋಣೆ? ) ನಿಂದ ವೀಕ್ಷಿಸಿದರು. ಈ ಕೋಣೆಯನ್ನು ಅತ್ಯಂತ ಗಂಭೀರ, ದೇಶದ ಭದ್ರತಾ ಸಂದರ್ಭಗಳಲ್ಲಿ ಉಪಯೋಗಿಸುತ್ತಾರೆ. ೧೯೬೧ ರಲ್ಲಿ ಜಾನ್ ಎಫ್ ಕೆನಡಿ ಕಾಲದಲ್ಲಿ ಈ ಕೋಣೆಯನ್ನು ನಿರ್ಮಿಸಲಾಯಿತು.        

ಈ ಲೇಖನದ ಉದ್ದೇಶ ಏನೆಂದರೆ, ಮೇಲಿನ ಚಿತ್ರದಲ್ಲಿ ಮಹನೀಯರುಗಳು ಗುಂಪುಗೂಡಿ ಅತಿ ಆಸಕ್ತಿ, ಗಾಭರಿ ಕಾತುರತೆಯಿಂದ ವೀಕ್ಷಿಸುತ್ತಿದ್ದಾರೆ ಬಿನ್ ಲಾದೆನ್ ವಧಾ ಪ್ರಹಸನವನ್ನು. ನಮಗೆ ಅಮೆರಿಕೆಯ ಅಧ್ಯಕ್ಷರ ಮುಖ ಪರಿಚಯ ಇಲ್ಲ ಎಂದು ಊಹಿಸಿಕೊಳ್ಳಿ. ನಾವು ಈ ಚಿತ್ರದಲ್ಲಿ ಇರುವ ವ್ಯಕ್ತಿಗಳಲ್ಲಿ ಯಾರಿರಬಹುದು ಅಮೆರಿಕೆಯ ಅಧ್ಯಕ್ಷ ಎಂದು ಊಹಿಸಲು ಸಾಧ್ಯವೇ? ನಾನು ಅಮೆರಿಕೆಯ ಅಧ್ಯಕ್ಷ, ಅಮೆರಿಕೆಯ ಸುಪ್ರೀಂ ಕಮಾಂಡರ್ ಎಂದು ಈ ಕುಳಿತವರಲ್ಲಿ, ನಿಂತವರಲ್ಲಿ ಯಾರಾದರೂ ಫೋಸು ಕೊಡುತ್ತಿರುವವರೇ, ಹಮ್ಮುಬಿಮ್ಮು ಪ್ರದರ್ಶಿಸುತ್ತಿರುವವರೇ? ಊಹಿಸಲು ಸಾಧ್ಯವಿಲ್ಲ, ಅಲ್ಲವೇ? ಮೂಲೆಯಲ್ಲಿ ಕಪ್ಪು ಜಾಕೆಟ್ ತೊಟ್ಟು, ಮುದುಡಿ ಕೂತು,  ಕಾತುರ, ಗಾಭರಿಯಿಂದ ವೀಕ್ಷಿಸುತ್ತಿರುವ ವ್ಯಕ್ತಿಯೇ ಒಬಾಮಾ.

ದೇಶದ ಭದ್ರತೆಯ ವಿಷಯ ಬಂದಾಗ ತಿರುಕನಿಂದ ಹಿಡಿದು ಆಳುವವನ ವರೆಗೂ ಎಲ್ಲರದೂ ಒಂದೇ ಧೋರಣೆ, ಒಂದೇ ಗುರಿ. ಇಲ್ಲಿ ಅಂತಸ್ತಿನ, ವರ್ಚಸ್ಸಿನ, ಬೇರಾವುದೇ ಕೃತಕ ಪ್ರದರ್ಶನವಾಗಲೀ ಇರುವುದಿಲ್ಲ. ಇಡೀ ದೇಶ ಒಂದಾಗಿ ಬಿಡುತ್ತದೆ. ಓರ್ವ ವ್ಯಕ್ತಿಯಾಗಿ, ಹೋರಾಡುತ್ತದೆ. ಈ ಚಿತ್ರದಲ್ಲಿ ಭಾರತೀಯರಾದ ನಮಗೆ ಪಾಠ ವಿದೆಯೇ?

ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ

ಭಾರತ ವಿಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಕೆಟ್ಟ ಅಂಪೈರಿಂಗ್ ಕಾರಣ ತಡವಾಗಿ ಮುಗಿಯಿತು. ಇಲ್ಲದಿದ್ದರೆ ಸ್ವಲ್ಪ ಬೇಗನೆ ಪಂದ್ಯ  ಗೆದ್ದು ವಿಶ್ರಾಂತಿ ಪಡೆಯ ಬಹುದಿತ್ತು ಎಂದು ವಿಜಯದ ನಂತರ  ನಮ್ಮ ತಂಡದ ನಾಯಕ ಧೋನಿ ದೂರಿದರು. ಕಾಲ ಹೇಗೆ ಬದಲಾಯಿತು ನೋಡಿ.  

೧೯೮೩ ರಲ್ಲಿ ವೆಸ್ಟ್ ವಿಂಡೀಸ ನ್ನು ಸೋಲಿಸಿ ವಿಶ್ವ ಕಪ್ ಗೆದ್ದ ಭಾರತ ವಿಶ್ವವನ್ನೇ ಬೆರಗು ಗೊಳಿಸಿತ್ತು. ಆಗಿನ ಕಾಲದ ಪಂಡಿತರ ಪ್ರಕಾರ ಬಲಿಷ್ಠ ವಿಂಡೀಸ್ ವಿರುದ್ಧದ ಭಾರತದ ಗೆಲುವು ಒಂದು fluke ಆಗಿತ್ತು. ಆದರೆ ಭಾರತ ಬರೀ ಫೈನಲ್ ನಲ್ಲಿ ಅಲ್ಲ, prelim ರೌಂಡ್ಸ್ ನಲ್ಲೂ ವಿಂಡೀಸನ್ನು ಮಣಿಸಿತ್ತು. ಆದರೂ ಟೀಕಾಕಾರರಿಗೆ ಭಾರತದ ಶಕ್ತಿಯ ಬಗ್ಗೆ ಅನುಮಾನವೇ ಇತ್ತು. ಈ ಅನುಮಾನ ನಿಜವಾಗಿಸಲೆಂಬಂತೆ ವೆಸ್ಟ್ ಇಂಡೀಸ್ ಭಾರತ ಪ್ರವಾಸ ಆರಂಭಿಸಿತು. ಆರು ಟೆಸ್ಟು, ಐದು ಏಕ ದಿನ ಪಂದ್ಯಗಳ ಸರಣಿಯಲ್ಲಿ  ಭಾರತವನ್ನು ಮೂರು ಟೆಸ್ಟು ಗಳಲ್ಲೂ, ಎಲ್ಲಾ ಏಕ ದಿನ ಪಂದ್ಯಗಳಲ್ಲೂ ಸೋಲಿಸಿ ವಿಶ್ವ ಕಪ್ ಸೋತಿದ್ದು ನಮ್ಮ ತಿಮಿರಿನಿಂದ ಅಲ್ಲದೆ ಭಾರತದ ಕ್ರೀಡಾ ಕೌಶಲ್ಯದಿಂದ ಅಲ್ಲ ಎನ್ನುವುದನ್ನು ವಿಂಡೀಸ್ ವಿಶ್ವಕ್ಕೆ ತೋರಿಸಿ ಕೊಟ್ಟಿತು.  

ಆಗ ಪ್ರವಾಸಗೈದಿದ್ದ ವಿಂಡೀಸ್ ತಂಡದಲ್ಲಿ ಘಟಾನುಘಟಿ ಗಳೇ ತುಂಬಿದ್ದರು. ವಿವಿಯನ್ ರಿಚರ್ಡ್ಸ್, ಕ್ಲೈವ್ ಲಾಯ್ಡ್, ಮಾಲ್ಕಂ ಮಾರ್ಷಲ್ ಹೀಗೆ ಅತಿರಥ ಮಹಾರಥರ ಧಾಳಿಗೆ ನಮ್ಮ ತಂಡ mediocre ತಂಡದಂತೆ ತೋರಿತು. ಮಾಲ್ಕಂ ಮಾರ್ಷಲ್ ಅಂತೂ ತನ್ನ ಮಾರಕ ಅತಿ ವೇಗದ ಬೌಲಿಂಗ್ ಧಾಳಿಯಿಂದ ನಮ್ಮ ಬ್ಯಾಟ್ಸ್ಮನ್ ಗಳಿಗೆ ಸಿಂಹ ಸ್ವಪ್ನವಾಗಿದ್ದ. ಈಗ ನೋಡಿ ಅವರ ಪಾಡನ್ನು. ಯಾವುದೇ ಮೊತ್ತದ ರನ್ನು ಚೇಸ್ ಮಾಡಲೂ ಪಡುವ ಪಾಡನ್ನು.    

ಯಥೇಚ್ಛ ಹಣ, ಮತ್ತು ಹಣದ ಅಭಾವ ಯಾವ ರೀತಿ ಒಂದು ಕ್ರೀಡೆಯನ್ನು ರೂಪಿಸಬಲ್ಲುದು ಮತ್ತು ನಿಸ್ತೇಜವಾಗಿಸಬಹುದು ಎನ್ನುವುದಕ್ಕೆ ಭಾರತ ವಿಂಡೀಸ್ ಕ್ರಿಕೆಟ್ ಕ್ರೀಡೆಯೇ ಸಾಕ್ಷಿ. ಕ್ರಿಕೆಟ್ ನಲ್ಲಿ ಹಣವಿದೆ ಮತ್ತು ಶ್ರೀಮಂತ ಪ್ರಾಯೋಜಕರ ಬೆಂಬಲ ಅದಕ್ಕಿದೆ ಎಂದರಿತ ಪೋಷಕರು ತಮ್ಮ ಮಕ್ಕಳು ಈ ಕ್ರೀಡೆಯನ್ನು ಪ್ರವೇಶಿಸಲು ಉತ್ತೇಜಿಸಿದರು. ಪರಿಣಾಮ ಹೊಸ ಪ್ರತಿಭೆಗಳು ದಂಡು ದಂಡಾಗಿ ಆಗಮಿಸಿದವು. ಈಗ ಭಾರತ ಕ್ರಿಕೆಟ್ ಸುದೃಢ. ಬಲಿಷ್ಠ. ಆದರೆ ಈ ಭಾಗ್ಯದ ಲಕ್ಷ್ಮಿ ವಿಂಡೀಸರಿಗೆ ಒಲಿಯದೆ ಹೋದಳು. ಪ್ರಾಯೋಜಕರ ಕೊರತೆ ಮಾತ್ರವಲ್ಲ ಅಲ್ಲಿನ ಕ್ರಿಕೆಟ್ ಮಂಡಳಿ ಕೊಡುವ ಹಣವೂ ಏನೇನೂ ಸಾಲದಾದಾಗ ಒಂದು ಕಾಲದಲ್ಲಿ fearsome  ಆಗಿದ್ದ ವಿಂಡೀಸ್ ಕ್ರಿಕೆಟ್ ನೆಲ ಕಚ್ಚಿತು.

ವಿಂಡೀಸ್ ತನ್ನ ಗತ ವೈಭವವನ್ನು ಯಾವಾಗ ಮರಳಿ ಪಡೆದೀತೋ ಕಾದು ನೋಡಬೇಕು.    

ಕುರಿಗಳು ಸಾರ್, ಕುರಿಗಳಲ್ಲಾ ಸಾರ್

ಪ್ರಾಣಿಗಳಿಗೆ ಹಿಂಸೆ ಆದಾಗ ಪ್ರಾಣಿ ದಯಾ ಸಂಘಕ್ಕೆ ಕರೆ ಕೊಡೋದು ವಾಡಿಕೆ. ಬಂದ್ ಗಾಗಿ ಕರೆ ಅಲ್ಲ, ಬಂದು ಪ್ರಾಣಿಯನ್ನು ಉಳಿಸಿ ಅಂತ ಹೇಳೋಕೆ ಕರೆ. ಜಟಕಾ ಗಾಡಿಯ ಮಾಲೀಕ ಬಳಲಿದ, ಹಸಿದ, ನಿತ್ರಾಣವಿಲ್ಲದೆ ಒಲ್ಲೆ ಎಂದರೂ ಬಿಡದೆ ಬಾರು ಕೋಲಿನಿಂದ ಬಾರಿಸಿ ತನ್ನ ಗಾಡಿಯಲ್ಲಿರುವ ಪೋಸ್ಟ್ ಮಾರ್ಟಂ ದಾರಿ ಹಿಡಿದ ಹೆಣ ವನ್ನು ಅದು ಸೇರಬೇಕಾದ ಸ್ಥಳ ತಲುಪಿಸಲು ಕುದುರೆಗೆ ಕೊಡುವ ಹಿಂಸೆ ನೋಡಿ, ನೋಡಲಾರದೆ ಪ್ರಾಣಿ ದಯಾ ಸಂಘಕ್ಕೆ ಬುಲಾವ್ ಕೊಡೋದು.  ಹೌದು ಪ್ರಾಣಿಗಳಿಗೆ ದಯೆ ತೋರಿಸಬೇಕಾದ್ದೆ. ಆದರೆ ಈ ಬುಲಾವ್ ಬರೀ ಕುದುರೆ ಕತ್ತೆ ನಾಯಿಗಳಿಗೆ ಮಾತ್ರ ಏಕೆ, ಕೋಳಿ ಕುರಿಗಳಿಗೂ ಏಕಿಲ್ಲ ಅವೂ ಪ್ರಾಣಿಗಳೇ ಅಲ್ಲವೇ ಎಂದು ಕೆಲವರ ಸಂಶಯ. ಒಬ್ಬರ ಸಂಶಯಕ್ಕೆ ಪಾರ್ಶ್ವ ಉತ್ತರವಾಗಿ ಮತೊಬ್ಬರು ಹೇಳಿದರು, ಕುರಿ ಏನೋ ಪ್ರಾಣಿಯೇ, ಆದರೆ ಕೋಳಿ ಪ್ರಾಣಿಯಲ್ಲ, ಅದು ಪಕ್ಷಿ ಎಂದು. ಪ್ರಾಣಿಯೋ , ಪಕ್ಷಿಯೋ ಪ್ರಾಣವಂತೂ ಇದೆಯಲ್ರೀ ಅಂತೀರಾ? ಸೊಳ್ಳೆಗೂ ಇದೆ ಪ್ರಾಣ, ಹಾಗೆಯೇ ತಿಗಣೆಗೂ ಸಹ, ಅಲ್ವರ? ಸೊಳ್ಳೆಯನ್ನು ಕೊಲ್ಲಲು ಈಗ ಚೀನೀ ತಂತ್ರಜ್ಞಾನ ಉಪಯೋಗಿಸುತ್ತಿಲ್ಲವೇ ನಾವು. ಟೆನ್ನಿಸ್ ಬೆಡಗಿ ಸಾನಿಯಾ ಥರ ಎಲೆಕ್ಟ್ರೋನಿಕ್ ಬ್ಯಾಟ್ ಹಿಡಿದು ಚಟ ಚಟ, ಚಟ, ಚಟಾ ಅಂತ ಅಟ್ಟಾಡಿಸಿಕೊಂಡು ಸುಡುತ್ತಿಲ್ಲವೇ ಸೊಳ್ಳೆ ಗಳನ್ನು?  ನಮ್ಮ ಕಿವಿಗಳ ಸುತ್ತಾ ಹಾರುತ್ತಾ, ತಪ್ಪಿಸಿಕೊಳ್ಳುತ್ತಾ, ಒಂದು ರೀತಿಯ ಅಣಕದ ಶಬ್ದ ಮಾಡಿ ನಂತರ ನಮ್ಮ ರಕ್ತ ಹೀರುವ  ಸೊಳ್ಳೆಗಳನ್ನು ಹಾಗೆ ಬಿಡಿ ಅಂತೀರಾ ಎಂದು ಕೇಳಬೇಡಿ. back hand, fore hand, ಹೀಗೆ ನಾನಾ ರೀತಿ ರಾಕೆಟ್ ತಿರುಗಿಸಿ ಫ್ರೈ ಮಾಡಿ ಸೊಳ್ಳೆಗಳನ್ನು.   ಹಾಗಾದರೆ ಈ ಮೇಲಿನ ಪುರಾಣ ಯಾಕೆ? ಕುರಿ, ಕೋಳಿ, ಪ್ರಾಣಿ ದಯೆ, ಬ್ಲಾ, ಬ್ಲಾ, ಬ್ಲಾ ಎಂದಿರಾ?

ಈಗ ಪ್ರಾಣಿ ಹಿಂಸೆ ವಿಷಯ ಬಂದಾಗ ಕೆಲವರು by choice ಅಥವಾ by taste ಕಾರಣ ಆರಿಸಿಕೊಂಡ ಆಹಾರ ಪದ್ಧತಿಗೆ ಕೊನೆ ಹಾಡಿ ಕುರಿ ಕೋಳಿ ಭಕ್ಷ್ಯ ಮಾಡುವ ಪರಿಪಾಠಕ್ಕೆ ನಾಂದಿ ಹಾಡಬೇಕು. ನಮ್ಮ ದೇಶದಲ್ಲಿ ಕುರಿ ಕೋಳಿ ಹಂದಿ ಮುಂತಾದುವುಗಳ ಹಿಂಸೆಗೆ ನಾಂದಿ ಹಾಡಿದರೆ ವಿಎಟ್ನಾಮ್, ಚೈನಾ, ಮುಂತಾದ ದೇಶಗಳಲ್ಲಿ ನಾಯಿ, ಜಿರಲೆ ಇವುಗಳ ಹತ್ಯೆಗೂ ಹಾಡಬೇಕು ಇತಿಶ್ರೀ. ಅಯ್ಯೋ ನಾಯ್ ತಿಂತಾರಾ ಚೈನಾದಲ್ಲಿ ಎಂದು ಮೂಗೆಳೆಯಬೇಡಿ. ಆರ್ಥಿಕ ಸಂಕಷ್ಟ ಜನರನ್ನು ಬಡಿದು ಕುರಿ ಕೋಳಿ, ಹಂದಿ ದುಬಾರಿ ಯಾದಾಗ ನಾಯಿಗಳು “ಮೆನ್ಯು ಪಟ್ಟಿ”- menu-  ಗೆ ಬಡ್ತಿ ಪಡೆದು ಕೊಳ್ಳುತ್ತವೆ ಕೆಲವು ದೇಶಗಳಲ್ಲಿ. ಕುರಿ ಕೋಳಿ ಹತ್ಯೆ ಕುರಿತ ಚರ್ಚೆಯಲ್ಲಿ ಓದುಗರೊಬ್ಬರು ಕೇಳಿದರು, “ಪ್ರಾಣ ಇರುವುದೆಲ್ಲ ಪ್ರಾಣಿಗಳೇ ….. ಜಗದೀಶ್ ಚಂದ್ರಬೋಸರು ತೋರಿಸಿದ್ದಾರೆ ಸಸ್ಯಗಳೀಗೂ ಪ್ರಾಣವಿದೆ ಹಾಗೂ ಅವೂ ಉಸಿರಾಡುತ್ತವೆ ಎಂದು. ಹಾಗಾಗಿ ಪ್ರಾಣಿ ದಯಾಸಂಘದವರು ಪ್ರಾಣವಿರುವ ಎಲ್ಲವನ್ನೂ ರಕ್ಷಿಸಲು ಮುಂದಾಗಬೇಕು ಎನ್ನುವುದು ನನ್ನ ಕೋರಿಕೆ!!!!!” ಓಹ್, ಇದೆಂಥಾ ಬಾಂಬ್ ಅಪ್ಪಾ! ಹಾಗಾದರೆ ನಾವು ತಿನ್ನೋದೇನನ್ನು? ನನಗೆ ಗೊತ್ತಿಲ್ಲ. ಆದರೆ ಅದುನ್ ತಿನ್ನೋದ್ ಬ್ಯಾನ್ ಮಾಡಿ, ಇದುನ್ ತಿನ್ನೋದನ್ ಬ್ಯಾನ್ ಮಾಡಿ ಎನ್ನುವವರಿಗೆ ಮತ್ತೊಂದು ಉತ್ತರ ಹೀಗೆ..

“ಅನುಕೂಲ ಶಾಸ್ತ್ರ” ದ proponent ಗಳಿಗೆ ತಮ್ಮದೇ ಆದ ತರ್ಕಗಳಿರುತ್ತವೆ, ಆ ತರ್ಕಗಳಿಗೆ ವಿವೇಚನೆ ಅಥವಾ reasoning ಕೆಲಸಕ್ಕೆ ಬಾರದ ಸಂಗತಿಗಳು, ಹಾಗೆಯೇ “ಅನುಕೂಲ ಶಾಸ್ತ್ರ” thrive ಆಗೋದು ನಂಬರ್ ಗೇಂ ನಲ್ಲಿ. ಸಂಖ್ಯೆ ಹೆಚ್ಚಿದ್ದರೆ ಅವರು ಹೇಳಿದ್ದೇ ಸರಿ, ಈ ವಿಷಯದಲ್ಲಿ ಮಾತ್ರ ಇವರುಗಳು truly democratic.
ತುರೇ ಮಣೆ ಕಯ್ಯಿಂದ ನಿರ್ದಯವಾಗಿ ತುರಿಸಿಕೊಳ್ಳುವ ತೆಂಗಿನಕಾಯಿ ಮತ್ತು ಹರಿಯುವ ಚಾಕುವಿನ ಅಡಿ ದಯನೀಯವಾಗಿ ನಲುಗುವ ಈರುಳ್ಳಿ ಬಗ್ಗೆ ಇವರುಗಳಿಗೆ ಕನಿಕರ ಭಾವ ತೋರಿದಾಗ ಅವುಗಳನ್ನು ಒಳಗೊಂಡ ತಿನಿಸಿಗೂ ಬರುತ್ತದೆ ಸಂಚಕಾರ.

ಈಗ ಚರ್ಚೆ ಪರಿಸಮಾಪ್ತಿ. ನಡೀರಿ ಮಿಲ್ಟ್ರಿ ಹೋಟೆಲ್ ಕಡೆ.  ಚೀನಿಯರು ನಮ್ಮ menu ಮೇಲೆ ಇನ್ನೂ ಧಾಳಿ ಮಾಡಿಲ್ಲ ತಾನೇ? ಇಲ್ದಿದ್ರೆ, ನಾಯ್, ಜಿರಲೆ….ಅಯ್ಯೋ….

ಅಡಗಿ ಕೂತಿದ್ದ ಭಾಷೆ

Ethnologue ಎನ್ನುವ ಭಾಷೆಗಳ ಅಧ್ಯಯನಕ್ಕಾಗೇ ಇರುವ ಪತ್ರಿಕೆ ಪ್ರಕಾರ ಇದುವರೆಗೂ ನಮಗೆ ಗೊತ್ತಿರುವ ವಿಶ್ವದ ಭಾಷೆಗಳು ೬೯೦೯. ಈಗ ಭಾರತದಿಂದಲೇ ಮತ್ತೊಂದು ಭಾಷೆಯ ಪ್ರವೇಶವಾಗಿದೆ ಅರುಣಾಚಲ ಪ್ರದೇಶದಿಂದ. National Geographic’s Enduring Voices ನವರು ನಡೆಸಿದ ಅಧ್ಯಯನದಿಂದ ಈ ರೋಚಕ ಸಂಗತಿ ತಿಳಿದು ಬಂತು. “ಕೋರೋ” ಎಂದು ಕರೆಯಲ್ಪಡುವ ಈ ಭಾಷೆಯನ್ನು ಕೇವಲ ೮೦೦ ರಿಂದ ೧೨೦೦ ಜನ ಮಾತನ್ನಾಡುತ್ತಾರಂತೆ. ಇಂಥದ್ದೇ ಮತ್ತೊಂದು ಅಪರೂಪದ “ಬೊ” ಎನ್ನುವ ಅಂಡಮಾನ್ ದ್ವೀಪದ ಭಾಷೆ ಆ ಭಾಷೆಯನ್ನಾಡುವ  ಕೊನೆಯ ವ್ಯಕ್ತಿ ಕಳೆದ ವರ್ಷ ಸಾಯುವುದರೊಂದಿಗೆ ಅವನೊಂದಿಗೇ ಸ್ವರ್ಗ ಸೇರಿಕೊಂಡಿತು. ಧಾರ್ಮಿಕವಾಗಿ ಮಾತ್ರ ಉಪಯೋಗಿಸಲ್ಪಡುತ್ತಿದ್ದ ಸಂಸ್ಕೃತವೂ ಅದೇ ದಾರಿ ಹಿಡಿಯಬಹುದು ಎನ್ನುವ ಆತಂಕವಿತ್ತು ಮೊದಲು. 

ಕೋರೋ ಭಾಷೆ ಆಡುವ ಯುವಜನರು ಕ್ರಮೇಣ ಹಿಂದಿ ಮತ್ತು ಆಂಗ್ಲ ಭಾಷೆಗಳ ಕಡೆ ಒಲವನ್ನು ತೋರಿಸಲು ತೊಡಗಿದ್ದು ಇನ್ನು ಕೆಲವೇ ವರ್ಷಗಳಲ್ಲಿ ಅದೂ ಸಹ  “ಬೊ” ಭಾಷೆಯ ದಾರಿ ಹಿಡಿದರೆ ಅಚ್ಚರಿ ಪಡಬೇಕಿಲ್ಲ. ಮೇಲೆ ಹೇಳಿದ ಭಾಷೆ ಯೊಂದಿಗೆ ಅರುಣಾಚಲ ಪ್ರದೇಶದಲ್ಲಿ ಸುಮಾರು ೧೨೦ ಭಾಷೆಗಳಿವೆಯಂತೆ. “ಕೋರೋ” ಭಾಷೆ “ಅಕಾ” ಎನ್ನುವ ಮತ್ತೊಂದು ಅರುಣಾಚಲದ ಭಾಷೆಯ ರೂಪವೆಂದೇ ಮೊದಲಿಗೆ ಊಹಿಸಲಾಗಿತ್ತು. ಏಕೆಂದರೆ ಕೋರೋ ಮತ್ತು  ಭಾಷೆಯನ್ನಾಡುವ ಜನ ವೇಷ ಭೂಷಣ ಮತ್ತು ಅಡುಗೆ ಮುಂತಾದುವುಗಳಲ್ಲಿ ಒಂದೇ ರೀತಿಯ ಆಚರಣೆಗಳನ್ನು ಹೊಂದಿದ್ದರು ಮತ್ತು ಭಾಷೆಗಳು ಬೇರೆ ಬೇರೆಯದಾದರೂ ಅವರೊಳಗೆ (ಭಾಷಾಂತರ) ವಿವಾಹಗಳು ಏರ್ಪಡುವುದೂ ಉಂಟು. ಪ್ರೇಮಿಸಲು ಭಾಷೆಯ ಅವಶ್ಯಕತೆ ಅಲ್ಲ ಇರೋದು ಎನ್ನುವುದಕ್ಕೆ “ಕೋರೋ” ಮತ್ತು “ಬೊ” ಭಾಷಿಕರೇ ಸಾಕ್ಷಿ ನಿಲ್ಲುವರು, ಅಲ್ಲವೇ?  ಭಾಷೆಗಳು ಎಷ್ಟೊಂದು ಸ್ವಾರಸ್ಯವೆಂದರೆ ದ್ರಾವಿಡ ಭಾಷೆಗಳು ಭಾರತದಲ್ಲಿ ಮಾತ್ರ ಎಂದು ಅರಿತಿದ್ದ ನಮಗೆ ಆಫ್ಘಾನಿಸ್ತಾನದ ಪ್ರಾಂತ್ಯವೊಂದರಲ್ಲಿ ಬ್ರಾಹೂಯಿ ಎನ್ನುವ ಭಾಷೆ ದ್ರಾವಿಡ ಕುಟುಂಬಕ್ಕೆ ಸೇರಿದ್ದು ಎಂದು ತಿಳಿದಾಗ ವಿಶ್ವ ಭಾವನಾತ್ಮಕವಾಗಿ ನಿಜಕ್ಕೂ ಕುಬ್ಜ ಎಂದು ತೋರಿತು.

೬೯೦೯ ಭಾಷೆಗಳಲ್ಲಿ ಸುಮಾರು ಅರ್ಧದಷ್ಟು ಸಂಖ್ಯೆಯ ಭಾಷೆಗಳು ಕೊನೆ ಯುಸಿರೆಳೆಯುತ್ತಿವೆ ಎನ್ನುವ ಆಘಾತಕಾರಿ ಸತ್ಯವನ್ನೂ National Geographic’s Enduring Voices ಸಂಸ್ಥೆ ಹೊರಗೆಡಹಿದೆ. ಕೋರೋ ಭಾಷೆ ಲಿಪಿಯಿಲ್ಲದ ಭಾಷೆ, ಕೊಂಕಣಿ ಮತ್ತು ತುಳು ರೀತಿ.   

ಸ್ವಾರಸ್ಯ(?) ವೆಂದರೆ ಈಶಾನ್ಯ ಭಾರತದ ಅರುಣಾಚಲ ಪ್ರದೇಶಕ್ಕೆ  ಹೋಗಿ ಆ ಹೊಸ ಭಾಷೆಯ ಸೊಗಡನ್ನು ಕೇಳಿ ನೋಡಿ ಆನಂದಿಸೋಣ ಎಂದರೆ ಅಲ್ಲಿಗೆ ಹೋಗಲು “ವಿಶೇಷ ಅನುಮತಿ” permit ಬೇಕು. ನಾವೆಲ್ಲಾ ಟೀಕಿಸಲು, ದೇಶ ವಿರೋಧಿಗಳ ರಾಜ್ಯ ಎಂದು ಹಳಿಯುವ ಕಾಶ್ಮೀರಕ್ಕೆ ಹೋಗಲು ನಮಗೆ ಯಾವುದೇ ಪರವಾನಗಿ ಬೇಡ, ಕಾಶ್ಮೀರಿಗಳಂತೆಯೇ ಭಾರತೀಯರಾದರೆ ಸಾಕು. ಪರವಾನಗಿ ಪಡೆಯಬೇಕಾದ ಮತ್ತೆರಡು ರಾಜ್ಯಗಳೆಂದರೆ “ಮಿಜೋರಾಂ” ಮತ್ತು “ನಾಗಾಲ್ಯಾಂಡ್”.

ಭಾರತದ ವಿಜಯ

ಕೊನೆಗೂ ಬಂತು ಆ ದಿನ. ಆಂಗ್ಲ ಭಾಷೆಯಲ್ಲಿ D-Day. ತಮಗೆ ನಿರಾಸೆಯಾಗದಿರಲಿ ಎಂದು ಎರಡೂ ಕಡೆಯವರು ಆಶಿಸಿದ, ಬೇಡಿಕೊಂಡ, ಹರಕೆ ಹೊತ್ತು ಕೊಂಡ ದಿನ. ನೂರಾರು ವರ್ಷಗಳ ವಿವಾದಕ್ಕೆ, ವಿಶಾಲವಾದ ಭೂಮಿಯ ಜೊತೆ ನಮ್ಮೆಲ್ಲರನ್ನೂ ಸೃಷ್ಟಿಸಿದ, ಮನುಷ್ಯರಂತೆ ಬದುಕು ಎಂದು ತಾಕೀತಿನೊಂದಿಗೆ ಕಳಿಸಿದ, ಎಲ್ಲರೂ ಆರಾಧಿಸುವ ಪರಮಾತ್ಮನಿಗೆ  ಮಂದಿರವೋ ಮಸೀದಿಯೋ ಎನ್ನುವ ತಕಾರಾರಿಗೆ ಸಿಕ್ಕಿತು ಮುಕ್ತಿ. ಅದೂ ಸಂಕೀರ್ಣಮಯ ಮುಕ್ತಿ. ಸಂಕೀರ್ಣ ಸಮಸ್ಯೆಗೊಂದು ಅಷ್ಟೇ ಸಂಕೀರ್ಣವಾದ ಪರಿಹಾರ. ಅಯೋಧ್ಯೆ, ದೇಶದ ಜನರನ್ನು ಬೇರ್ಪಡಿಸಿದ್ದು ಮಾತ್ರವಲ್ಲ ದೇಶವಾಸಿಗಳು ತಮ್ಮ ಸಮಯ, ಶ್ರಮ, ಸಂಪತ್ತು ಈ ವಿವಾದದ ಹಿಂದೆ ಹೂಡಿ, ಕಚ್ಚಾಡಿ, ಬಡಿದಾಡಿ “

ವಸುಧೈವ ಕುಟುಂಬಕಂ” ಎಂಬುದು ಪುಸ್ತಕದ ಬದನೇಕಾಯಿ ಮಾತ್ರ ಎಂದು ಜಗತ್ತಿಗೆ ಸಾರಿದ ಸಮಸ್ಯೆ. ಬದುಕು, ಬದುಕಲು ಬಿಡು (ಜಿಯೋ ಔರ್ ಜೀನೇದೋ) ಎನ್ನುವ ಸಮೀಕರಣಕ್ಕೆ ಒಲ್ಲೆ ಎಂದು ಪಟ್ಟು ಹಿಡಿದ ವಿವಾದ. ಮೂರು ನ್ಯಾಯಾಧೀಶರುಗಳ ಪೀಠ ಕೊನೆಗೂ ಕೊಟ್ಟಿತು ತೀರ್ಪು, ಎರಡೆಕರೆ ೭೦ ಗುಂಟೆ ಮೂರುಭಾಗ ಮಾಡಿಕೊಂಡು ಭಜನೆ, ಹರಕೆ, ಏಕದೇವೋಪಾಸನೆ ಮಾಡಿಕೊಳ್ಳಿ ಎಂದು. ಆದರೆ ಈ ಗಲಾಟೆಯಲ್ಲಿ ರಾಮ ಮತ್ತು ರಹೀಮರು ನಿಮ್ಮ ಭಜನೆಯೂ ಬೇಡ, ಭಕ್ತಿಯೂ ಬೇಡ ಎಂದು ಸದ್ದಿಲ್ಲದೇ ಕಾಲು ಕಿತ್ತಿದ್ದು ಮಾತ್ರ ಯಾರೂ ಗಮನಿಸಲೇ ಇಲ್ಲ.

ಭಾರತ ಜಾತ್ಯಾತೀತ ರಾಷ್ಟ್ರ. ಆ ಹೆಗ್ಗಳಿಕೆಗೆ ನ್ಯಾಯವೆಸಗಲು ಹೆಣಗಿದ ತೀರ್ಪು ಇದು. ಇದರಲ್ಲಿ ಯಾರಿಗೂ ವಿಜಯವಿಲ್ಲ. ಆದರೆ ವಿಜಯ ಮಾಲೆ ತಾಯಿ ಭಾರತಿಗೆ ಎಂದು ಸಮಾಧಾನ. ಆದರೂ ಕೆಲವು ಕಿಡಿ ಗೇಡಿಗಳು ಸರಕಾರದ ಕಟ್ಟುನಿಟ್ಟಾದ ನಿರ್ದೇಶನದ ನಡುವೆಯೂ “V” ಪ್ರದರ್ಶಿಸುತ್ತಾ ಏನೋ ಸಾಧಿಸಿದವರಂತೆ ಫೋಸ್ ಕೊಟ್ಟರು. ದೇವರ ಹೆಸರಿನಲ್ಲಿ ರಾಜಕಾರಣ ಮಾಡಿ ಹೊಟ್ಟೆ ಹೊರೆದು ಕೊಳ್ಳುವವರಿಗೆ ಯಾವ ಸಂದಿಗ್ಧ ಪರಿಸ್ಥಿತಿಯೂ ವಿಜಯೋಲ್ಲಸವೇ. ಇಂದು ಬೆಳಗ್ಗಿನ ಹಲವು ಪತ್ರಿಕೆಗಳನ್ನು ನೋಡಿದ ನನಗೆ ಅನ್ನಿಸಿದ್ದು ಈಗಲೂ ಮಾಧ್ಯಮಕ್ಕೆ ಭಾರತೀಯರ ನಡುವೆ ಕಂದಕ ತೊಡುವುದೇ ಇವರ ಕಾಯಕ ಎಂದು. ಕರಾವಳಿಯ ಗುಡ್ಡದ ಮೇಲೊಂದರಿಂದ  ಪ್ರಕಾಶಿತವಾಗುವ ಪತ್ರಿಕೆಯಾಗಲಿ, ಸಮಸ್ತ ಕನ್ನಡಿಗರ ಹೆಮ್ಮೆ ಎಂದು ಘೋಷಣೆ ಹೊತ್ತ ಪತ್ರಿಕೆಯಾಗಲಿ ತಮ್ಮ screaming headlines ಮೂಲಕ ಒಂದು ಸಮಾಜಕ್ಕೆ ಸಂದ ವಿಜಯವೆಂದೇ ಪ್ರತಿಬಿಂಬಿಸಿದವು. ಈ ತೆರನಾದ, ಉದ್ರೇಕಿಸುವ ಪತ್ರಿಕೆಗಳ ತಲೆಬರಹಗಳನ್ನು ನಿರ್ಲಕ್ಷಿಸಿ ನ್ಯಾಯಾಲಯದ  ತೀರ್ಪನ್ನು ತಮ್ಮ ಸಂಸ್ಕೃತಿ ತಮ್ಮಿಂದ ಬಯಸುವ characteristic poise ಜೊತೆಗೆ “ಸಬರ್” (ಸಂಯಮ) ಅನ್ನು ಮೋಹಕವಾಗಿ ಪ್ರದರ್ಶಿಸುವ ಮೂಲಕ ಮುಸ್ಲಿಂ ಸಮಾಜದ ಬಂಧುಗಳು ಮಸೀದಿಗಿಂತ ದೇಶ ದೊಡ್ಡದು ಎಂದು ಜಗತ್ತಿಗೆ ತೋರಿಸಿಕೊಟ್ಟಿದ್ದು ಸಂತಸಕರ.

ದೇಶದ ಜನಸಂಖ್ಯೆಯ ಶೇಕಡಾ ೭೭ ಭಾಗ ಇಪ್ಪತ್ತಕ್ಕೂ ಕಡಿಮೆ ರೂಪಾಯಿಯ ಆದಾಯದ ಮೇಲೆ ಕಳೆಯುತ್ತಾರಂತೆ. ಒಪ್ಪೊತ್ತಿನ ಅನ್ನಕ್ಕಾಗಿ ಪರದಾಡುವವನಿಗೆ ತನ್ನ ಹಸಿದ ಹೊಟ್ಟೆಗೆ ಊಟ ಯಾವ ಕಡೆಯಿಂದ ಬರಬಹುದು ಎನ್ನುವ ಕಾತುರ, ನಿರೀಕ್ಷೆ.  ದೇಶವನ್ನು ಕಿತ್ತು ತಿನ್ನುತ್ತಿರುವ ಸಾಮಾಜಿಕ ಅಸಮಾನತೆ, ಹಸಿವು, ಲಂಚ, ಕೊಲೆ ಸುಲಿಗೆ ಬಗ್ಗೆ ಮೇಲಿನ ಸಮಸ್ಯೆಗಳಿಗೆ ತೋರಿಸಿದ ಕಾಳಜಿ, ಕಾತುರ ತೋರಿದ್ದಿದ್ದರೆ ಪಕ್ಕದ ಚೀನಾ ಅಥವಾ ಮಲೇಷ್ಯ ದಂಥ ದೇಶಗಳ ಪ್ರಗತಿ ಕಂಡು ಕರುಬುವ ಅವಶ್ಯಕತೆ ಇರಲಿಲ್ಲ. ಏನೇ ಆಗಲಿ ಈ ದೇಶದ ನೆಮ್ಮದಿ ಕೆಡಿಸಿದ್ದ ಸಮಸ್ಯೆಗೆ ಒಂದು ಪರಿಹಾರ ಬಂತು ಅಲ್ಲಾಹನ ಊರಿನಿಂದ (ಇಲಾಹಾಬಾದ್). ಈ ತೀರ್ಪು ದೇಶಕ್ಕೆ ಅವಶ್ಯ ಬೇಕಾದ ಶಾಂತಿ ನೆಮ್ಮದಿ ಕೊಡಿಸುವುದೋ ಎಂದು ನ್ಯಾಯ ಮೂರ್ತಿಗಳು ವಿಧಿಸಿದ ಮೂರು ತಿಂಗಳುಗಳ status quo ಉತ್ತರ ನೀಡಬಹುದು.            

ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನವನ್ನು ಕುತೂಹಲದಿಂದ ನೋಡುತ್ತಾ ಕೂತ ನಮಗೆ ಕಿಟಕಿಯ ಮೂಲಕ ಕಾಣಲು ಸಿಕ್ಕಿದ್ದು, ನನ್ನ ಎರದುಉವರೆ ವರ್ಷದ ಪುಟ್ಟ ಪೋರಿ ಕಾಲುದ್ದ ಮಾಡಿಕೊಂಡು ನನ್ನ ಮೇಜಿನ ಮೇಲಿನಿಂದ ಎಗರಿಸಿದ ಪುಟ್ಟ ಭಾರತದ ಧ್ವಜದಿಂದ ತನ್ನ ಮುಖಕ್ಕೆ ತಂಗಾಳಿಯನ್ನು ಬೀಸಿಕೊಳ್ಳುತ್ತಾ ಮಂದಿರ ಮಸೀದಿ ವಿವಾದ ನನಗೆ ನಗಣ್ಯ ಎನ್ನುವ ಥರ ಕೂತಿದ್ದಳು.

ಇಂದು ಬೆಳಿಗ್ಗೆ ನನ್ನ mobile ಗೆ ಬಂದ ಸಂದೇಶ; who are we Hindu or Muslim? When there is “Ali” in “Diwali” and “Ram” in “Ramadan” cant we help India to be united?

ಮುಸ್ಲಿಮರಲ್ಲಿ ಕಾಣಲು ಸಿಕ್ಕಿದ ಈ ಮೇಲಿನ ಉದಾತ್ತ, ಸಾಮರಸ್ಯದ ಭಾವನೆ ಸರ್ವರಲ್ಲೂ ಕಾಣುವಂತಾಗಲಿ ಎಂದು ಆಶಿಸುತ್ತಾ..

ಬ್ರಾಹ್ಮಣ ಯುವತಿಯ ಉರ್ದು ಶಾಯರಿ

ನಮ್ಮ ಭಾರತ ವೈವಿಧ್ಯಮಯ ದೇಶ. ಹಲವು ಸಂಸ್ಕೃತಿಗಳ ಬೀಡು. ಇಲ್ಲಿ ಎಲ್ಲರ ಭಾವನೆಗಳನ್ನೂ ಗೌರವಿಸಿ, ಆದರಿಸಿ ನಡೆಯುವುದು ಹೇಗೆ ಎಂದು ನಮ್ಮ ಜನರಿಗೆ ಚೆನ್ನಾಗಿ ಗೊತ್ತು. ಆ ಕಾರಣಕ್ಕಾಗೆ ನಮ್ಮ ದೇಶ ವಿಶ್ವದ ಪ್ರಶಂಸೆಗೆ ಪಾತ್ರ. ಇಲ್ಲಿ ಹಿಂದೂ, ಜೈನ, ಕ್ರೈಸ್ತ ಧರ್ಮದವರಿಗೆ ಸಿಕ್ಕ ಮನ್ನಣೆಯೇ ಮುಸ್ಲಿಂ ಸೂಫಿ ಸಂತರಿಗೂ ಸಿಕ್ಕಿತು. ಸೂಫಿ ಸಂತರ ಬದುಕಿನ ರೀತಿ ನೋಡಿ ಅವರನ್ನು ಅನುಸರಿಸಿದವರೂ ಕಡಿಮೆಯಲ್ಲ. ಹಾಗೆಯೇ ಹಿಂದೂ ಧರ್ಮಾಚರಣೆ ಗಳನ್ನೂ, ಅವರ ದೇವ ದೇವತೆಗಳನ್ನೂ ಕೊಂಡಾಡಿದ ಮುಸ್ಲಿಮರಿಗೂ ಕೊರತೆಯಿಲ್ಲ. ಬ್ರಾಹ್ಮಣ ಮಹಿಳೆ ಇಸ್ಲಾಮನ್ನು ಪ್ರಶಂಸಿಸಿ ಶಾಯರಿ ಪ್ರಸ್ತುತ ಪಡಿಸಿದ್ದು ಮೇಲೆ ಹೇಳಿದ ವಿಶಾಲ ಹೃದಯಕ್ಕೆ ಸಾಕ್ಷಿ. ಕೆಳಗಿದೆ ನೋಡಿ ಕೊಂಡಿ,  

https://hasnain.wordpress.com/2010/08/10/lata-haya-about-islam/

ವ್ರತಾಚರಣೆಯ ಮಾಸ

ರಮದಾನ್, (ರಂಜಾನ್ ಎಂದೂ ಕರೆಯಲ್ಪಡುತ್ತದೆ, ramzan) ಇಸ್ಲಾಮೀ ಪಂಚಾಂಗದ ಒಂಭತ್ತನೆ ತಿಂಗಳು ಮತ್ತು ಇಸ್ಲಾಮಿನ ಐದು ಸ್ಥಂಭಗಳಲ್ಲಿ ಮೂರನೆಯ ಸ್ಥಂಭವಾದ ರಮದಾನ್ ತಿಂಗಳಿನಲ್ಲಿ ಜಗತ್ತಿನ ಮುಸ್ಲಿಮರು ದಿನವಿಡೀ ಉಪವಾಸವಿದ್ದು ವಿಶೇಷ ಆರಾಧನೆಯಲ್ಲೂ, ಪವಿತ್ರ ಕುರಾನ್ ಪಾರಾಯಣದಲ್ಲೂ ತಮ್ಮ ಸಮಯ ಕಳೆಯುತ್ತಾರೆ. ಈ ಕಾರಣಕ್ಕಾಗಿ ಈ ಮಾಸವನ್ನು ದಾನದ, ಧ್ಯಾನದ ಮತ್ತು ಚಿಂತನೆಯ ಮಾಸವೆಂದು ಕರೆಯುತ್ತಾರೆ (month of charity, contemplation, and reflection). ಚಂದ್ರ ದರ್ಶನದೊಂದಿಗೆ ಆರಂಭವಾಗುವ ೩೦ ದಿನಗಳ ಈ ಉಪವಾಸ ವ್ರತ ಮುಸ್ಲಿಮ್ ಜಗತ್ತಿಗೆ ಹೊಸ ಚೈತನ್ಯವನ್ನೂ, ಧಾರ್ಮಿಕತೆಯನ್ನೂ ತುಂಬುತ್ತದೆ.

ನಮ್ಮನ್ನು ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸುವುದಕ್ಕೆ, ಪ್ರಾಮುಖ್ಯತೆ ಹೆಚ್ಚು. ಯಾವುದೇ ಪರಿಸ್ಥಿತಿಯಲ್ಲೂ ಐದು ಹೊತ್ತಿನ ನಮಾಜನ್ನು ನಿರ್ವಹಿಸಲೇಬೇಕು. ನಮಾಜ್ ಜೊತೆಗೆ ಕುರಾನ್ ಸೂಕ್ತಗಳನ್ನು ಪಠಿಸುವುದು, ಹಜ್ ಯಾತ್ರೆ, ಇವೂ ಸಹ ಆರಾಧನೆಯಲ್ಲೇ ಒಳಗೊಳ್ಳುತ್ತದೆ. ಆದರೆ ನಮಾಜ್, ಕುರಾನ್ ಪಠಣ, ಹಜ್ ಇತ್ಯಾದಿಗಳು  ತೋರಿಕೆಯ ಆರಾಧನೆಯಾಗಿಯೂ ಮಾರ್ಪಡಬಹುದು. ನಾನು ಧರ್ಮಿಷ್ಠ ಎಂದು ತೋರಿಸಲು ಎಲ್ಲರಿಗೂ ಕಾಣುವಂತೆ ಮಸ್ಜಿದ್ ಗೆ ಹೋಗುವುದು, ಹಜ್ ಯಾತ್ರೆ ಮಾಡುವುದು ಹೀಗೆ. ಆದರೆ ವ್ರತಾಚಾರಣೆ ಹಾಗಲ್ಲ. ಇದೊಂದು ರಹಸ್ಯ ಆರಾಧನೆ. ಉಪವಾಸವಿರುವವನ ಮತ್ತು ಅವನ ಪ್ರಭುವಿಗೆ ಮಾತ್ರ ತಿಳಿಯುವ ಆರಾಧನೆ. ಮೂರನೆಯ ವ್ಯಕ್ತಿಗೆ ಇದರ ಅರಿವಿರುವುದಿಲ್ಲ; ಹಾಗಾಗಿ ವ್ರತಾಚರಣೆಗೆ ಹೆಚ್ಚು ಮಹತ್ವ.    

ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದವರೆಗೆ ಉಪವಾಸದ ಅವಧಿ. ಅರುಣೋದಯದ “ಪ್ರಾರ್ಥನೆಯ ಕರೆ” ( “ಅದಾನ್” ) ಕಿವಿಗೆ ಬಿದ್ದ ಕೂಡಲೇ ಆಹಾರ, ಪಾನೀಯಗಳು ನಿಷಿದ್ಧವಾಗುತ್ತವೆ. ಅದೇ ರೀತಿ ಸೂರ್ಯಾಸ್ತದ ಪ್ರಾರ್ಥನೆಯ ಕರೆ ಕೇಳಿದ ಕೂಡಲೇ ಸ್ವಲ್ಪ ನೀರು ಮತ್ತು ಖರ್ಜೂರದ ಸಹಾಯದಿಂದ ಉಪವಾಸವನ್ನು ಕೊನೆಗೊಳಿಸಲಾಗುತ್ತದೆ. ಇಡೀ ದಿನದ ಉಪವಾಸದಿಂದ ಶರೀರದ ಮೇಲೆ ಹೆಚ್ಚು ವ್ಯತಿರಿಕ್ತ ಪರಿಣಾಮ ಆಗಬಾರದು ಎಂದು ಮಧ್ಯ ರಾತ್ರಿಯ ನಂತರ ಅಥವಾ ಅರುಣೋದಯದ ಸ್ವಲ್ಪ ಮೊದಲು ಸ್ವಲ್ಪವಾದರೂ ಆಹಾರ (ಇದಕ್ಕೆ “ಸುಹೂರ್” ಎಂದು ಕರೆಯುತ್ತಾರೆ) ತೆಗೆದು ಕೊಳ್ಳಲೇಬೇಕು. ಅದೇ ರೀತಿ ದಿನವಿಡೀ ಒಂದು ತೊಟ್ಟೂ ನೀರಿಲ್ಲದೆ, ತಮ್ಮ ದಿನಚರಿಗೆ ಯಾವುದೇ ಧಕ್ಕೆ ಬಾರದಂತೆ ತಮ್ಮ ಕೆಲಸ, ಧಂಧೆ ಮಾಡುತ್ತಾ ಉಪವಾಸವಿದ್ದು ಸೂರ್ಯಾಸ್ತಕ್ಕೆ ಒಂದು ಗುಟುಕು ನೀರು ಮತ್ತು ಒಂದು ತುಂಡು ಖರ್ಜೂರದ ಸಹಾಯದಿಂದ ಉಪವಾಸ ಕೊನೆಗೊಳಿಸುವುದಕ್ಕೆ  “ಇಫ್ತಾರ್” ಎಂದು ಕರೆಯುತ್ತಾರೆ. ಇಫ್ತಾರ್ ಪದವನ್ನು ತಾವು ಕೇಳಿರಲೇಬೇಕು, ನಮ್ಮ ರಾಜಕಾರಣಿಗಳು ಮುಸ್ಲಿಂ ಗೆಳೆಯರಿಗೆ ಏರ್ಪಡಿಸುವ ಔತಣ. ಪ್ರಾಯಕ್ಕೆ ಬಂದ ಪ್ರತೀ ಮುಸ್ಲಿಮ್ ಉಪವಾಸ ವ್ರತ ಆಚರಿಸಲೇಬೇಕು ಎಂದು ಕಡ್ಡಾಯವಾದ ನಿಯಮ. ಖಾಯಿಲೆಯಿಂದ ಬಳಲುವವರಿಗೆ ಮತ್ತು ಯಾತ್ರಿಗಳಿಗೆ ಇದರಿಂದ ವಿನಾಯಿತಿ ಇದ್ದು ಯಾತ್ರೆ ಮುಗಿದ ನಂತರ, ಮತ್ತು ಖಾಯಿಲೆಯಿಂದ ಗುಣಮಮುಖರಾದ ನಂತರ ತಪ್ಪಿಹೋದ ಉಪವಾಸ ದಿನಗಳನ್ನು ಉಪವಾಸ ಇರುವ ಮೂಲಕ ತೀರಿಸಬೇಕು,ಅದೂ ಸಾಧ್ಯವಾಗದಿದ್ದರೆ ತಪ್ಪಿ ಹೋದ ದಿನಗಳಿಗೆ ಪ್ರಾಯಶ್ಚಿತ್ತವಾಗಿ ಬಡ ಬಗ್ಗರಿಗೆ ಅನ್ನದಾನ ಮಾಡಬೇಕು.

ರಮದಾನ್ ಮಾಸದ ಮಹತ್ವದ ಬಗ್ಗೆ ಹೇಳುತ್ತಾ ಪ್ರವಾದಿಗಳು ಹೇಳಿದ್ದು, ರಮದಾನ್ ಮಾಸ ೭೦,೦೦೦ ತಿಂಗಳು ಗಳಿಗೆ ಸಮಾನ ಎಂದು. ಅದೂ ಅಲ್ಲದೆ ಇದೇ ತಿಂಗಳಿನಲ್ಲಿ ಪವಿತ್ರ ಕುರಾನ್ ನ ಸೂಕ್ತಗಳು ಅವತೀರ್ಣವಾಗಿದ್ದು.  ಈ ಕಾರಣಕ್ಕಾಗಿ ಜಗದಾದ್ಯಂತ ಮುಸ್ಲಿಮರು ಈ ತಿಂಗಳ ತಮ್ಮ ಬಿಡುವಿನ ವೇಳೆಯಲ್ಲಿ ಮತ್ತು ಹೆಚ್ಚು ಸಮಯ ಕುರಾನ್ ಪಾರಾಯಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಹಾಗೆಯೆ ಈ ತಿಂಗಳಿನಲ್ಲಿ ರಾತ್ರಿಯಲ್ಲಿ “ತರಾವೀಹ್” ಎಂದು ಕರೆಯಲ್ಪಡುವ ವಿಶೇಷ ಪ್ರಾರ್ಥನೆಗಳು ಸಹ ನಡೆಯುತ್ತವೆ. ಪ್ರತೀ ಆರಾಧನೆ, ದಾನ, ಒಳ್ಳೆಯ ಮಾತು, ಕೃತಿ ಇವುಗಳಿಗೆ ಪ್ರತಿಫಲ ಸಹ ೭೦,೦೦೦ ಪ್ರತಿಫಲದ ರೀತಿಯಲ್ಲಿ ದೇವರು ಕೊಡುವನೆಂದೂ ಮುಸ್ಲಿಮ್ ವಿಧ್ವಾಂಸರು ಹೇಳುತ್ತಾರೆ.      

ರಮದಾನ್ ತಿಂಗಳಿನಲ್ಲಿ ನಾವು ಮಾಡುವ ಪ್ರತೀ ಕೆಲಸವೂ ಇಸ್ಲಾಮೀ ಆದರ್ಶಗಳಿಗೆ ಪೂರಕವಾಗಿರಬೇಕೆಂದು ವಿಧ್ವಾಂಸರುಗಳು ಎಚ್ಚರಿಸುತ್ತಾರೆ. ಈ ಮಾಸದಲ್ಲಿ ಉದ್ರೇಕ ಪಡುವುದಾಗಲೀ,ಕೆರಳುವುದಾಗಲೀ ಮಾಡಬಾರದು. ಹಾಗೇನಾದರೂ ಯಾರಾದರೂ ಉದ್ರೇಕಿಸಿದರೆ “ನಾನು ವ್ರತಾಚರಣೆ ಮಾಡುತ್ತಿದ್ದೇನೆ” ಎಂದು ಹೇಳಿ ಮೌನವಾಗಿರಬೇಕು ಎಂದು ಸಲಹೆ ನೀಡುತ್ತಾರೆ. ಜ್ಞಾನಾರ್ಜನೆ, ಮತ್ತು ಸಂಯಮ ಪಾಲನೆ ರಮದಾನ್ ತಿಂಗಳ ವೈಶಿಷ್ಟ್ಯ ಎನ್ನಬಹುದು. ವ್ರತಾಚರಣೆಯ ಮೂಲಕ ರಮದಾನ್ ತಿಂಗಳು ನಮಗೆ “ಸ್ವ ನಿಗ್ರಹ” ದ ಗುಣವನ್ನೂ, ಸಂಯಮ ಶೀಲತೆಯನ್ನೂ ಕಲಿಸುತ್ತದೆ. ಈ ತೆರನಾದ ನಡವಳಿಕೆ ಮುಸ್ಲಿಮರು ಬರೀ ರಮದಾನ್ ಮಾಸಕ್ಕೆ ಸೀಮಿತಗೊಳಿಸದೆ ತಮ್ಮ ಬದುಕಿನ ಪ್ರತೀ ಘಳಿಗೆಯಲ್ಲೂ ಪಾಲಿಸಿದರೆ ದೇವರು ಯಶಸ್ಸನ್ನು ದಯಪಾಲಿಸುತ್ತಾನೆ ಸಮಾಜಕ್ಕೆ ಆದರ್ಶಪ್ರಾಯನಾಗಿ ಬದುಕುತ್ತಾನೆ.  

ಪ್ರತೀ ಮುಸ್ಲಿಂ ಮನೆಯಲ್ಲೂ ರಮದಾನ್ ಒಂದು ವಿಶೇಷ ತಿಂಗಳಾಗಿರುತ್ತದೆ. ಅದರಲ್ಲೂ ಮಕ್ಕಳಿಗೆ ಒಂದು ರೀತಿಯ ಸಂತಸ. ಐದು ವರ್ಷದ ಮೇಲ್ಪಟ್ಟ ಮಕ್ಕಳೂ ಸಹ ಪೂರ್ತಿ ತಿಂಗಳಲ್ಲದಿದ್ದರೂ ಸಾಧ್ಯವಾದಷ್ಟು ದಿಂದ ಉಪವಾಸ ಆಚರಿಸಲು ಯತ್ನಿಸುತ್ತಾರೆ. ನನ್ನ ಆರು ವರ್ಷದ ಮಗ ಕಳೆದ ಎರಡು ವರ್ಷಗಳಿಂದ ೮ – ೧೦ ದಿನ ಉಪವಾಸವಿದ್ದನು. ಸಂಜೆಯಾಗುತ್ತಿದ್ದಂತೆ ಮಕ್ಕಳು ಕಾತುರದಿಂದ ಮಸ್ಜಿದ್ ಗಳ ಗೋಪುರಗಳು ಹೊರಡಿಸುವ ಅದಾನ್ ಗಾಗಿ ಕಾದು ನಿಂತು “ಅಲಾಹು ಅಕ್ಬರ್” (ದೇವರು ಸರ್ವಶ್ರೇಷ್ಠ ) ಎನ್ನುವುದನ್ನು ಕೇಳುತ್ತಲೇ ಓಡಿ ಬಂದು ಅಮ್ಮಾ, ಅಪ್ಪಾ, ಅದಾನ್ ಆಗುತ್ತಿದೆ, ಬೇಗ ನೀರು ಕುಡಿಯಿರಿ ಎಂದು ಉತ್ತೇಜಿಸುತ್ತಾರೆ.

೩೦ ದಿನಗಳ ಉಪವಾಸ ಮುಗಿದ ನಂತರ ಚಂದ್ರ ದರ್ಶನ ವಾಗುತ್ತಲೇ “ಈದ್” ಸಂಭ್ರಮ ಎಲ್ಲೆಡೆ. ಚಂದ್ರ ದರ್ಶನ ಆಗುತ್ತಲೇ ಮಾರನೆ ದಿನದ ಈದ್ ನಂದು ಯಾರೂ ತಿನ್ನಲು ಇಲ್ಲದೆ ಬಳಲಬಾರದು ಎಂದು ಬಡಬಗ್ಗರಿಗೆ ಅಕ್ಕಿ ದಾನ ಮಾಡುತ್ತಾರೆ. ಈ ದಾನದಿಂದಾಗಿಯೇ ಈದ್ ಹಬ್ಬಕ್ಕೆ “ಈದ್ ಅಲ್ ಫಿತ್ರ್” ಎಂದು ಹೆಸರು.         

ಸೌದಿ ಅರೇಬಿಯಾದಲ್ಲಿ ರಮದಾನ್ ತುಂಬಾ ಸೊಗಸು. ಇಡೀ ತಿಂಗಳು ಮತ್ತು ಅದರ ನಂತರ ಬರುವ ಸುಮಾರು ಹತ್ತು ದಿನಗಳ ಈದ್ ಸಂಭ್ರಮ. ಇಡೀ ನಗರವೇ ಅಲಂಕಾರದಲ್ಲಿ ಮುಳುಗಿರುತ್ತದೆ. ಎಲ್ಲೆಲ್ಲೂ ವಿಶೇಷ offer ಗಳು, ಬಹುಮಾನಗಳು, ರಸ್ತೆ ಬದಿಯಲ್ಲಿ ಉಪವಾಸವಿಟ್ಟುಕೊಂಡು ಪ್ರಯಾಣ ಮಾಡುವವರಿಗೆ ಪುಕ್ಕಟೆ ತಿಂಡಿ ತೀರ್ಥಗಳ ವಿತರಣೆ, ನಿರ್ಗತಿಕರಿಗೆ, ಕೆಳಸ್ತರದ ಉದ್ಯೋಗ ಮಾಡುವವರಿಗೆ ದಾನ ಮಾಡುವಲ್ಲಿ ಪೈಪೋಟಿ, ಹೀಗೆ ನಾನಾ ರೀತಿಯ ಚಟುವಟಿಕೆಗಳನ್ನು ಕಾಣಬಹುದು. ಕೆಲಸದ ಸಮಯವೂ ನಾಲ್ಕು ಅಥವಾ ಐದು ಘಂಟೆಗಳು. ಹಾಗಾಗಿ ಉಪವಾಸವಿರುವುದು ಬಹಳ ಸುಲಭ ಅರೇಬಿಯಾದಲ್ಲಿ.