ಬ್ಲಾಗಿಗೊಂದು ಎಲ್ಲೆ ಎಲ್ಲಿದೇ…

ಬ್ಲಾಗಿಗೊಂದು ಎಲ್ಲೆ ಎಲ್ಲಿದೇ, ನಿರಾಸೆಗಿಲ್ಲಿ ಕೊನೆಯಿದೇ,

ಏನೇನು ಕನಸು ಕಾಣುವೇ,

ಬ್ಲಾಗಿಸು ನೀ ಬ್ಲಾಗಿಸೂ…

ನನ್ ಫ್ರೆಂಡ್ ಕೇಳ್ದ, ಏನಮ್ಮಾ ತುಂಬಾ ಬ್ಲಾಗ್ತಾ ಇದ್ದೀಯಾ, ಏನ್ಸಮಾಚಾರ ಅಂತ. ಏನಮ್ಮಾ ತುಂಬಾ ಬೊಗುಳ್ತಾ ಇದ್ದೀಯಾ ಅಂತ ಮಾತ್ರ ಕೇಳಿಲ್ಲ ಪುಣ್ಯಾತ್ಮ. ಈ ಬ್ಲಾಗ್ ಅಲೆ ಅಥವಾ ಶೋಕಿ ಬಂದ ಮೇಲಂತೂ ಎಲ್ಲರೂ ಬೊಗಳುವವರೇ, ಊಪ್ಸ್ ಬ್ಲಾಗುವವರೇ. ಒಂದಲ್ಲ ಒಂದು ವಿಷಯವಂತೂ ಇದ್ದೇ ಇರುತ್ತಲ್ಲ ಹೇಳೋದಕ್ಕೆ, ಬರೆಯೋದಕ್ಕೆ. ನಲ್ಲಿ ಜಗಳದಿಂದ ಹಿಡಿದು, ನಮ್ಮನ್ನು ಆಳುವವರ ಲೈಂಗಿಕ ಬದುಕಿನವರೆಗೂ ವಿಷಯಗಳೋ ವಿಷಯಗಳು. ಇವನ್ನೆಲ್ಲಾ ಬರೆದರೆ ಪ್ರಕಟಿಸಲು ಪತ್ರಿಕೆಗಳು ಬೇಕಲ್ಲ. ಮೊದಲೇ ಎರವಲು ಪಡೆದು ಓದುವ ಸಮಾಜ. ಇನ್ನು ಅಂಡೇ ಪಿರ್ಕಿಗಳು ಬರೆದದ್ದನ್ನೆಲ್ಲಾ ಕೊಂಡು ಓದುವುದೂ ಇಲ್ಲ, ಅದಕ್ಕೆ ಬಿಡುವೂ ಇಲ್ಲ. ಇಂಥ ಸನ್ನಿವೇಶದಲ್ಲಿ ಬ್ಲಾಗ್ ವಿಶ್ವ ತನ್ನ ಬಾಗಿಲು ತೆರೆದು ಎಲ್ಲರಿಗೂ ಒಂದು ವೇದಿಕೆ ಒದಗಿಸಿತು, ಒದರಲು. ಸಮಾನತೆಯ ಮೋಹಕ ಕಹಳೆ. blogging is a great liberator and equalizer. ಚಿರಪರಿಚಿತ ಲೇಖಕರಿಂದ ಹಿಡಿದು ಅಂಡೇ ಪಿರ್ಕಿ (ಈ ಪದ ಎರಡು ಸಲ ಬರೆದಿದ್ದು ಏಕೆಂದರೆ ಇದು ನನಗಿಷ್ಟವಾದ ಪದ, ಕನ್ನಡದವರಿಗೆ ಕ್ರಿಯಾ ಶೀಲತೆ ಇಲ್ಲ ಎನ್ನುವವರಿಗೆ ಈ ಪದ ಒಂದು ಉತ್ತರ) ಗಳವರೆಗೆ. ಬರೆಯಿರಪ್ಪಾ/ಮ್ಮಾ ಎಂದು ಮುಕ್ತ ಆಹ್ವಾನ.

ವಿ.ಸೂ : ಅಂಡೇ ಪಿರ್ಕಿ ಎನ್ನುವ ಪದ ಸಭ್ಯವೋ, ಸಂಸದೀಯವೋ (parliamentary) ಎನ್ನುವುದರ ಬಗ್ಗೆ ಯಾರಾದರೂ ಬರೆದರೆ ಚೆನ್ನಿತ್ತು.

ಹಾಗೆಯೇ, ತಲೆ ಸರಿಯಿಲ್ಲದವನಿಗೆ, ಪೆಕರು ಪಕರು ಥರಾ ಆಡುವವನಿಗೆ “ಮಂಡೆ ಪಿರ್ಕಿ” (ಮಂಡೆ, ಅಂದ್ರೆ ತಲೆ) ಅಂತ ಕರೆದರೆ ಹೇಗೆ? ನಮ್ಮ ಕನ್ನಡ ಶಬ್ದ ಭಂಡಾರವನ್ನು ಇನ್ನಷ್ಟು ಶ್ರೀಮಂತಗೊಳಿಸಿದಂತಾಗದೇ?

ಮದುವೆಯ ಈ ಬಂಧಾ…..

ವಿವಾಹದ ದಿನ ಎಂದರೆ ಪ್ರತಿ ಹೆಣ್ಣು ಗಂಡಿನ ಬದುಕಿನ ಅತ್ಯಂತ ಮಹತ್ತರವಾದ, ಎಂದೆಂದೂ ನೆನಪಿನಲ್ಲುಳಿಯುವ ದಿನ. ರೋಮಾಂಚನ, ದುಗುಡ, ಕಾತುರ, ಸಂತಸ, ಹೆಮ್ಮೆ ಹೀಗೆ ನೂರೊಂದು ಭಾವನೆಗಳು ವಿವಾಹದಂದು. ಆ ವಿಶೇಷ ದಿನಕ್ಕಾಗಿಯೇ ವಧೂ ವರರು ತಿಂಗಳುಗಟ್ಟಲೆ ತಯಾರಿ ನಡೆಸಿರುತ್ತಾರೆ. ವರ ಅಷ್ಟೊಂದು ತಲೆ ಕೆಡಿಸಿಕೊಳ್ಳದಿದ್ದರೂ ವಧುವಿಗಂತೂ ತನ್ನ ವಿವಾಹದ ದಿನ ಹೀಗೆಯೇ ಇರಬೇಕೆನ್ನುವ ಸ್ಪಷ್ಟ ಕಲ್ಪನೆ ಇರುತ್ತದೆ.

ನಮ್ಮ ದೇಶದಲ್ಲಿ ಯಾವ ಧರ್ಮೀಯರೇ ಆಗಲಿ ವಿವಾಹದ ದಿನ ತಮ್ಮ ಸಂಸ್ಕೃತಿಯನ್ನು ಬಿಂಬಿಸುವ ಉಡುಗೆ ತೊಡುಗೆ ಇಷ್ಟಪಟ್ಟರೆ ಪಾಶ್ಚಾತ್ಯರದು ಬೇರೆಯೇ ಆದ ದೃಷ್ಟಿಕೋನ. ಉಡುಗೆ ಮಾತ್ರವಲ್ಲ ಮದುವೆ ಆಗುವ ಸ್ಥಳಗಳೂ ಸಹ ವಿಚಿತ್ರವೇ. ಕೆಲವರು ನೀರಿನೊಳಕ್ಕೆ ಇಳಿದು ವಿವಾಹಿತರಾದರೆ ಇನ್ನೂ ಕೆಲವರು ಪ್ಯಾರಾಶೂಟ್ ನಲ್ಲಿ ಕೂತು ಮದುವೆ ಆಗುತ್ತಾರೆ.

ಹೀಗೆ ವಿವಿಧ ರೀತಿಯಲ್ಲಿ ಜನರ ಗಮನವನ್ನ ಸೆಳೆಯುವ ಉದ್ದೇಶದೊಂದಿಗೆ ವಿಶಿಷ್ಟ ವಾದ ರೀತಿಯಲ್ಲಿ ಮದುವೆಯಾಗುತ್ತಾರೆ.  ಕೆಲವು ಉಡುಗೆಗಳ ದೃಶ್ಯಗಳಿವೆ ಪಾಶ್ಚಾತ್ಯರದು. ನೋಡಿ ಆನಂದಿಸಿ.

 

ಮೇಲಿನ ಬಲ ಬದಿಯ ಎರಡು ಚಿತ್ರಗಳನ್ನೂ ನೋಡಿ ಮೂರ್ಛೆ ಹೋಗಿಲ್ಲ ತಾನೇ? ಹೋದರೂ ಅಚ್ಚರಿಯಿಲ್ಲ. ಸತ್ತ ಹೆಣವೂ ಶವ ಪೆಟ್ಟಿಗೆಯೊಳಕ್ಕೆ ಮಲಗಲು ಹೆದರುತ್ತದೆ, ಆದರೆ ಈ ಲಲನಾಮಣಿ ವಧು ಆರಿಸಿಕೊಂಡ ಜಾಗ ಶವಪೆಟ್ಟಿಗೆ. ಅವಳ ಗುಂಡಿಗೆಗೆ ಕೊಡಬೇಕು ನೋಡಿ ಬಹುಮಾನ. ತಾನು ಪ್ರೀತಿಸಿದ ವನನ್ನು ವಿವಾಹವಾಗಲು ೨೭ ವರ್ಷ ತಗುಲಿತಂತೆ. ಅಷ್ಟರಲ್ಲಿ ಇಬ್ಬರಿಗೂ ಬೇರೆಯವರೊಂದಿಗೆ ಮದುವೆಯಾಗಿ ಮಕ್ಕಲ್ಲೂ ಇದ್ದವು. ಕೊನೆಗೆ ಈ ಪ್ರೇಮಿಗಳು ಮದುವೆಯಾಗುವ ಕಾಲ ಕೂಡಿ ಬಂತು ತಮ್ಮ ತಮ್ಮ ಬಾಳ ಸಂಗಾತಿಗಳು ಬೇರೆಯಾದಾಗ. ಇನ್ನೆಂದೂ ತನ್ನ ಇನಿಯ ತನ್ನಿಂದ ಬೇರೆಯಾಗ ಕೂಡದೆಂದು ಅವನ ಕೊರಳಿಗೆ ನಾಯಿಗೆ ಕಟ್ಟುವ ಪಟ್ಟಿ ಕಟ್ಟಿದ್ದಾಳೆ ಸಹ. ನಮ್ಮಲ್ಲಿ ಹೆಣ್ಣಿಗೆ ತಾಳಿ ಕಟ್ಟುವುದಿಲ್ಲವೆ ಹಾಗೆ.

ಕಟುಕನಿಗಾಗಿ ಕಾಯುತಿಹ ಕುರಿಗಳು ಮತ್ತು ಕುವರಿಯರು

                                            

ನಾಗರೀಕ ಸಮಾಜಕ್ಕೆ ಕಳಂಕವಾಗಿರುವ ವೇಶ್ಯಾವಾಟಿಕೆ ಬಗ್ಗೆ ಸನ್ಮನಸ್ಸಿನ ಕನ್ನಡಿಗರೊಬ್ಬರು “ಸಂಪದ” ದದಲ್ಲಿ ಚರ್ಚೆ ಇಟ್ಟು ತಾವು ಬೆಂಗಳೂರಿನಲ್ಲಿ ಕಂಡ ದೃಶ್ಯದ ಬಗ್ಗೆ ಓದುಗರ ಗಮನ ಸೆಳೆದರು.

ಮೈಮಾರುವ, ವೇಶ್ಯಾವಾಟಿಕೆ, ಹಾದರ, ಹೀಗೆಲ್ಲಾ ವಿವಿಧ ನಾಮಾವಳಿಗಳಿಂದ ಗುರುತಿಸಲ್ಪಡುವ flesh trade ಇಂದು ನಿನ್ನೆಯದಲ್ಲ. ಇದು world’s oldest profession ಅಂತೆ. ಈ ವೃತ್ತಿಗೆ profession ಅಂತ ಕರೆದು ದಾರ್ಶನಿಕ ಅಥವಾ ಸಮಾಜ ಶಾಸ್ತ್ರಜ್ಞ ಈ ವೃತ್ತಿಗೆ ಒಂದು definition ಕೊಟ್ಟು ಮನುಷ್ಯನ ನೂರಾರು ವೃತ್ತಿಗಳಲ್ಲಿ ಇದೂ ಒಂದು ಎಂದು ಪ್ರತಿಬಿಂಬಿಸಿ ಪರೋಕ್ಷವಾಗಿ ಪ್ರೋತ್ಸಾಹಿಸಿದ್ದಾನೆ. ಮತ್ತೊಂದು ಕಡೆ ನಮ್ಮ ಹೆಣ್ಣು ಮನೆಯ ಹೆಣ್ಣು ಮಕ್ಕಳು ಮಾನವಾಗಿ ಓಡಾಡಲು ಪರರ ಹೆಣ್ಣು ಮಕ್ಕಳು ಮಾನ ಬಿಟ್ಟು ಮೆಜೆಸ್ಟಿಕ್ ನಲ್ಲೋ ಇನ್ಯಾವುದಾದರೂ ರೆಡ್ ಲೈಟ್ ಏರಿಯಾದಲ್ಲಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಗಿರಾಕಿಗೆ ಕಾಯಬೇಕು. ಹೇಗಿದೆ ವ್ಯವಸ್ಥೆ? ಈ ವ್ಯವಸ್ಥೆ ಸರಿ ಎಂದು ಹೇಳುವ ಮಹಿಳೆಯರೂ ಇದ್ದಾರೆ.

ಯಾವ ಹೆಣ್ಣೂ ತನ್ನ ಸ್ವ ಇಚ್ಚೆಯಿಂದ ಈ ದಂಧೆಗೆ ಇಳಿಯುವುದಿಲ್ಲ. ಹೌದು ಶಾಪಿಂಗ್ ಗೀಳು ಹಚ್ಚಿಕೊಂಡ ಕೆಲವರು ಶೋಕಿಗಾಗಿ, (ಇದರಲ್ಲಿ ಗೃಹಿಣಿಯರೂ ಸೇರಿದ್ದಾರೆ ಎನ್ನುವುದನ್ನು ಮರೆಯಬಾರದು) ಈ ಕೆಲಸಕ್ಕೆ ಇಳಿಯುತ್ತಾರೆ. ಈ ದಂಧೆಯ ಬಗ್ಗೆ ಕೂಲಂಕುಷವಾಗಿ ನೋಡಿದಾಗ ನಮಗೆ ಸಿಗುವ ಕಾರಣಗಳು ಹಲವು. ಬಳಕೆದಾರ ಸಂಸ್ಕೃತಿ, ಕೊಳ್ಳಲು ಪ್ರೇರೇಪಿಸುವ ಜಾಹೀರಾತುಗಳು, ಸಂಪತ್ತನ್ನು ವೈಭವೀಕರಿಸುವ ಸೀರಿಯಲ್ಲುಗಳು. ಇದಲ್ಲದೆ ಸಂಪತ್ತಿನ ಬಗೆಗಿನ ಸಮಾಜದ ದೃಷ್ಟಿಕೋನ. ಯಶಸ್ವೀ ವ್ಯಕ್ತಿ ಬಳಿ ದೊಡ್ಡ ಕಾರು, ಬಂಗಲೆ ಇದ್ದರೆ ಅವನಿಗೆ ಮನ್ನಣೆ. ಆ ಬಂಗಲೆ, ಕಾರು, ಸಂಪತ್ತು ಹೇಗೆ ಬಂತು ಎಂದು ಕೇಳುವ ಅರಿಯುವ ಹಂಬಲ ಸಮಾಜಕ್ಕಿದೆಯೇ? ಯಾವುದಾದರೂ upscale neighbourhood ಕಡೆ ನಡೆದರೆ ತಿಳಿಯುತ್ತೆ. ನೋಡಪ್ಪಾ, ಅಲ್ಲಿರೋ ಬಂಗಲೆ forest conservator ಅವರದು. ಅಲ್ಲಿ ನಿಂತಿದೆಯಲ್ಲಾ ದೊಡ್ಡ ಕಾರು,ಅದು pwd engineer ಅವರದು, ಅಲ್ಲಿ ಯಮಾಹಾ ಬೈಕಿನಲ್ಲಿ ಹೋಗ್ತಾ ಇದ್ದಾನಲ್ಲ ಅವನು ಕೆಎಸ್ಸಾರ್ಟೀಸಿ ಬಸ್ಸಿನ ಕಂಡಕ್ಟರನ ಮಗ, MBBS ಮಾಡ್ತಾ ಇದ್ದಾನೆ……….ಹೀಗೆ ಸಾಗುತ್ತದೆ ಗುಣಗಾನ, ಪ್ರಶಂಸೆ, ಭಕ್ತಿ ಭಾವ. ನಾವೆಂದಾದರೂ ಯೋಚಿಸಿದ್ದೇವೆಯೇ ಈ ವ್ಯಕ್ತಿಗಳು ಪಡೆಯುವ ಸಂಬಳದಲ್ಲಿ ಈ ಸೌಕರ್ಯಗಳನ್ನು ತಮದಾಗಿಸಿಕೊಳ್ಳಲು ಅವರಿಂದ ಸಾಧ್ಯವೇ ಎಂದು? ಮಾನ ಬಿಟ್ಟು ಸಂಪಾದನೆ ಮಾಡಿದರೆ ಸಂಪಾದನೆ ಮಾನವನ್ನು ತಂದು ಕೊಡುತ್ತದಂತೆ. ಎಷ್ಟು ಸೊಗಸಾಗಿ ಮರಳಿ ಬಂತು ನೋಡಿ ಮಾನ ಇಲ್ಲಿ. ಈಗ ವೇಶ್ಯಾವಾಟಿಕೆಗೂ ಇಲ್ಲಿ ಬರೆದಿರುವುದಕ್ಕೂ ಏನು ಸಂಬಂಧ ಎಂದು ಯೋಚಿಸುತ್ತಿದ್ದೀರಾ ತಾನೇ?

ಅನೈತಿಕ ಸಂಪಾದನೆಯನ್ನು ಕಂಡು ಹಿಗ್ಗಿ, ಹೊಗಳುವ ಸಮಾಜ ಒಳಗೊಳಗೇ ಅದೇ ರೀತಿ ತಾನೂ ಆಗಬೇಕೆಂದು ಬಯಸುತ್ತದೆ. ಈ ಸಂಪತ್ತನ್ನು ನೋಡಿದ ಸಾಮಾನ್ಯ ಗೃಹಿಣಿ ತನ್ನ ಗಂಡನನ್ನು ಪ್ರೇರೇಪಿಸುತ್ತಾಳೆ ಅಡ್ಡ ದಾರಿ ಹಿಡಿ ದು ಸಂಪಾದಿಸಲು. ಅಬಲೆ ಬಯಸುತ್ತಾಳೆ ತನ್ನ ಮೈ ಮಾಟವನ್ನು ಶ್ರೀಮಂತನಿಗೆ ಉಣಿಸಿದರೆ ಅವನಂತೆಯೇ ತಾನೂ ಸುಖವಾಗಿ ಇರಬಹುದು ಎಂದು. ಲಂಚ ಪಡೆಯುವ ವ್ಯಕ್ತಿ ಒಂದು ರೀತಿಯ ಹಾದರ ಮಾಡಿದರೆ ಏರು ಜವ್ವನೆ ಮತ್ತೊಂದು ರೀತಿಯ ಹಾದರಕ್ಕೆ ಇಳಿಯುತ್ತಾಳೆ. ಇಬ್ಬರ ಉದ್ದೇಶ ಸ್ಪಷ್ಟ. ಭರ್ಜರಿಯಾಗಿ ಬಾಳುವುದು.

ಶೀಲ ಮತ್ತು ಅಶ್ಲೀಲದ ಮಧ್ಯೆ ಇರುವ ಪರದೆ ಬಹು ತೆಳುವಾದುದು. ಯಾವುದೋ ಒಂದು ಘಳಿಗೆಯಲ್ಲಿ, ಯಾವುದೋ ಒಂದು ಕಾರಣಕ್ಕೆ ಆ ಪರದೆ ಸರಿಯಿತೋ ಪಯಣ ಶುರು ಅನೀತಿಯೆಡೆಗೆ. ಚಿಕ್ಕ ಪುಟ್ಟ, ಒಂದು ಸಲ, ಎರಡು ಸಲ, ಎಂದು ತಮಗರಿವಿಲ್ಲದೆಯೇ ಅನೈತಿಕತೆಯ ಪ್ರಪಾತಕ್ಕೆ ಜಾರುತ್ತಾರೆ. ಟೀವೀ ಆನ್ ಮಾಡಿದರೆ ಸೀರಿಯಲ್ಲುಗಳಲ್ಲಿ ಸಾವಿರ ಕೋಟಿಗಳ ಮಾತು, ಬೀದಿಯಲ್ಲಿ ಹೋದರೆ ಭರ್ರ್ ಎಂದು ಹೋಗುವ ಮಾರುತಿ, ಹೊಂಡಾ, ಮರ್ಸಿಡೀಸ್ ಗಳು. ಪರಿಣಾಮ? ಈ ಮೇಲೆ ಹೇಳಿದ ಸಂಪತ್ತನ್ನು ಕಂಡು ಜೊಲ್ಲು ಸುರಿಸಿ ನೋಡುತ್ತಾ ಮೆಜೆಸ್ಟಿಕ್ನಲ್ಲಿ ನಿಲ್ಲುವ ನೀರೆಯರು.

ಮಾವಿನ ಹಣ್ಣು

ಈ ಚಿತ್ರವನ್ನು ನನ್ನ ಎರಡು ವರ್ಷದ ಮಗಳು ಇಸ್ರಾ ತೆಗೆದದ್ದು. ನನ್ನ ತಂಗಿ ಇತ್ತೀಚೆಗೆ ಭಾರತಕ್ಕೆ ಹೋದಾಗ ನಮ್ಮ ಮನೆಯ ಮುಂದಿನ ಮರದಲ್ಲಿ ಆದ ಮಾವಿನ ಹಣ್ಣುಗಳನ್ನು ತಂದಿದ್ದಳು. ಹಣ್ಣು ಬಹಳ ರುಚಿಯಾಗಿದ್ದವು.  ಅದೂ ಅಲ್ಲದೆ ನಮ್ಮ ಮನೆಯ ತೋಟದಲ್ಲಿ ಬೆಳೆದ ಹಣ್ಣು ಎಂದರೆ ವಿಶೇಷವಾದ ರುಚಿ ಅದಕ್ಕೆ ಇರುತ್ತದಲ್ಲವೇ? ಮನೆಯ ಮುಂದಿನ ಮಾವಿನ ಮರಕ್ಕೆ ಹಾದು ಹೋಗುವ ಪಡ್ಡೆ ಹುಡುಗರ ದುರ್ಗಣ್ಣು. ಯಾರೂ ಇಲ್ಲದಾಗ ಮರ ಬೋಳಿಸಿ ಹೋಗಿ ಬಿಡುತ್ತಾರೆ. ನನ್ನಮ್ಮನ ಶಾಪವೋ ಶಾಪ.

ಹಣ್ಣುಗಳ ರಾಜ ಮಾವಿನ ಹಣ್ಣನ್ನು ಇಷ್ಟ ಪಡದವರು ವಿರಳ. ಕೆಲವರಿಗೆ ಮಾವಿನ ಹಣ್ಣು ಶರೀರವನ್ನು ಸ್ಥೂಲ ವಾಗಿಸುತ್ತದೆ ಎಂದು ತಿನ್ನಲು ಭಯ. ಒಂದು ದೊಡ್ಡ ಬಾಳೆ ಹಣ್ಣಿನಲ್ಲೂ ಮತ್ತು ಸಾಮಾನ್ಯ ಗಾತ್ರದ ಮಾವಿನ ಹಣ್ಣಿನಲ್ಲೂ ಇರುವುದು ೧೦೦ ಕ್ಯಾಲೋರಿಗಳು. ಬಾಳೆಹಣ್ಣನ್ನು ತಿನ್ನಲು ತಕರಾರಿಲ್ಲದೆ ಇದ್ದರೆ ಮಾವಿನ ಹಣ್ಣಿಗೇಕೆ ತಕರಾರು?

ಮಾವಿನ ಹಣ್ಣನ್ನು ತಿನ್ನುವ ಕಲೆ ತಿಳಿದಿರುವುದು ಕೆಲವರಿಗೆ ಮಾತ್ರ. ಇಡಿಯಾದ ಹಣ್ಣನ್ನು ಕತ್ತರಿಸದೆ ತಿಂದರಂತೂ ಆಗುವ ಪಾಡು ಗೊತ್ತೇ ಇದೆಯಲ್ಲ. ಮಾವಿನ ಹಣ್ಣಿನ ಕಲೆಯೂ ಸಹ ಸುಲಭವಾಗಿ ಹೋಗುವನ್ಥದ್ದಲ್ಲ. ಚಿಕ್ಕವನಿದ್ದಾಗ ಹಣ್ಣನ್ನು ತಿನ್ನುವಾಗ  ಅದರ ರಸ ಅಂಗೈಯಿಂದ ಹಿಡಿದು ಮೊಣಕಯ್ಯವರೆಗೂ ಬಂದು ಅಲ್ಲಿಂದ ತನ್ನ ದಿಕ್ಕನ್ನು ಬದಲಿಸಿ ಅಂಗಿಯ ಮೇಲೂ ಬಿದ್ದು, ಮುಂದುವರೆದು ಚಡ್ಡಿ ಪ್ಯಾಂಟಿ ನ ಮೇಲೆ ಎರಗಿದಾಗ ಮನೆಯಲ್ಲಿ ಅಮ್ಮನ ಕೈಯ್ಯಲ್ಲಿ ಹೊಡೆತ ತಿಂದ ಉದಾಹರಣೆಗಳು ಬಹಳ. ಹೇಗೆ ತಿಂದರೂ ತನ್ನ ಒಸರುವ ಬುದ್ಧಿ ಬಿಡದ ತುಂಟ ರಸ ಮೈ, ಬಟ್ಟೆ ಮೇಲೆ ಹರಿಯುವುದರಿಂದ ತಡೆಯಲು ಒಂದು ಮಾರ್ಗವಿದೆ. ಅದೆಂದರೆ ನಮ್ಮ ಪ್ರೀತಿಯ ಹಣ್ಣನ್ನು ನಮ್ಮೊಂದಿಗೆ ತಿನ್ನಲು ಕೊಂಡೊಯ್ಯುವುದು ಸ್ನಾನ ಗೃಹಕ್ಕೆ. ಶವರ್ ಅಡಿಯಲ್ಲಿ ನಿಂತು ತಿನ್ನಬೇಕು ಹಣ್ಣನ್ನು. ರಸ ತನಗೆ ಬೇಕಾದ ರೀತಿಯಲ್ಲಿ, ಬೇಕಾದ ಕಡೆ ಒಸರಿ ಕೊಳ್ಳಲಿ, ಹಾಡುತ್ತಾ ತಿಂದು, ಗೊರಟೆಯ ಬುಡ ಕಾಣುವವರೆಗೂ ಸರಿಯಾಗೇ ಚೀಪಿ ಶವರ್ ಆನ್ ಮಾಡಿದರೆ ಸಂಪೂರ್ಣ ಮುಕ್ತಿ ರಸದಿಂದ. ಹೇಗಿದೆ ಪ್ಲಾನು?

believe me, ನಾನು ಗಂಡಸೇ ಅಲ್ಲಾ…

“I am not a man, godman Nityananda told CID sleuths”. ಹಾಂ? ಮೂರ್ಛೆ ಹೋದಿರಾ ಇದನ್ನು ಕೇಳಿ? ಎಂಥ master stroke ನೋಡಿ ಈ ಯೋಗಿಯದು. ನೀವು ಕನಸಿನಲ್ಲಾದರೂ ನೆನೆಸಿದ್ದಿರೋ ಈ  flirting master ನಮ್ಮ ಕ್ರಿಕೆಟ್ನ ಮಾಸ್ಟರ್ ಬ್ಲಾಸ್ಟರ್ ರೀತಿ ಬಿಡು ಬೀಸಾಗಿ ಧಾಳಿ ಮಾಡುತ್ತಾನೆಂದು? ನಾನು ಗಂಡೇ ಅಲ್ಲ ! ಎಂಥ ಗಂಡೂ ನಿಜವಾಗಿಯೂ ಗಂಡೇ ಅಲ್ಲದಿದ್ದರೂ ಈ ಮಾತನ್ನು ಆಡಲು ಹಿಂಜರಿಯುತ್ತಾನೆ. ಯಾರೋ ಒಬ್ಬರು ಹೇಳಿದರು I am not a man, but Godman ಎಂದು ಆತ ಹೇಳಬೇಕಿತ್ತು ಎಂದು. ನನ್ನ ಪ್ರಕಾರ ಅವನು ಹೀಗೆ ಹೇಳಬೇಕಿತು, ನಾನು ಮನುಷ್ಯನಲ್ಲ, ಮನುಷ್ಯ ರೂಪದಲ್ಲಿರುವ ಮತ್ತೇನೋ, ನಾನು ನಿಮ್ಮ ಊಹೆಗೆ ನಿಲುಕದ ವ್ಯಕ್ತಿಯಲ್ಲ ವಗೈರೆ, ವಗೈರೆ. ನಾವು ಮೂಲತಃ ಇಂಥ ಕಪಟಿ ಗಳನ್ನು ನಂಬುವವರು, ನಮಗೆ ಮಂತ್ರವಾದಿಗಳು, ಮೋಸ ಮಾಡುವ ದೇವ ಮಾನವರು ಎಂದರೆ ಪಂಚ ಪ್ರಾಣ, ಈ ಜನ ನಮ್ಮ ಮೇಲೆ ಪಂಚ ಭೂತಗಳನ್ನು ಪ್ರಯೋಗ ಮಾಡಿದರೂ ನಮಗೆ ಅವರ ಮೇಲೆ ಅತೀವ ಭಕ್ತಿ, ವಿಶ್ವಾಸ. ಈ ನಮ್ಮ ದೌರ್ಬಲ್ಯವನ್ನು ಉಪಯೋಗಿಸಿ ಪೊಲೀಸರನ್ನೂ, ತನ್ನನ್ನು ತೆಗಳುವವರನ್ನೂ ಈ ನಿತ್ಯಾನಂದ ಕನ್ಫ್ಯೂಸ್ ಮಾಡಿದ್ದರೆ ಕಾನೂನಿನ ಕೋಳ ತಪ್ಪಿಸಿಕೊಂಡು ಮತ್ತೊಮ್ಮೆ ಬಳೆಗಳ ಹಿಂದೆ ಓಡಬಹುದಿತ್ತು.       

ಪುರುಷ ತನ್ನ erectile ಸಾಮರ್ಥ್ಯದ ಬಗ್ಗೆ ಅನುಮಾನ ಇದ್ದರೂ ದೊಡ್ಡ macho ರೀತಿಯ ಫೋಸ್ ಕೊಡುತ್ತಾನೆ. ಗಂಡ್ಸಾ ದರೆ ಬಾರೋ ಎಂದು ಚಾಲೆಂಜ್ ಮಾಡುವುದಿದೆ. ಆದರೆ ನಾನು ಗಂಡೇ ಅಲ್ಲ ಕಣೋ ಅಂದು ಬಿಟ್ಟರೆ? ಮರ್ಯಾದೆ ಬಿಟ್ಟು ಮಾನ ಸಂಪಾದಿಸುವ ಚಾಣಾಕ್ಷತನ. ನಾನು ಮಂತ್ರಮುಗ್ಧನಾದೆ ಈ ವ್ಯಕ್ತಿಯ ಚಾಣಾಕ್ಷತನಕ್ಕೆ. ನನ್ನ ಶುಕ್ರವಾರದ ಬೆಳಗಿನ ಮಂಪರು ಎಗರಿ ಹೋಯಿತು ನಿತ್ಯಾನಂದನ ಈ ಯಾರ್ಕರ್ ಗೆ. ಈಗ ನಮ್ಮ ಪೊಲೀಸರು ಏನು ಮಾಡಬಹುದು? doppler test ಅಂತೂ ಇದ್ದೇ ಇದೆ ಅನ್ನಿ. ಈ ಟೆಸ್ಟ್ ನಲ್ಲಿ ರಕ್ತ ಸಂಚಲನದ ತೀವ್ರತೆಯನ್ನು ಕಂಡು  ಹಿಡಿಯುತ್ತಾರೆ. ಬಹುಶಃ ಈ ಪರೀಕ್ಷೆಯಲ್ಲಿ ಗೊತ್ತಾಗಬಹುದು. ನಿತ್ಯಾನಂದನ ಈ ಸಮಸ್ಯೆಗೆ ಪೊಲೀಸರು ಕಚ್ಚೆ ಇಳಿಸಬಹುದು, ಆದರೂ ನಾನು ಗಂಡಲ್ಲ ಎಂದು ಅವನು ಹಠ ಹಿಡಿದು ಕೂತರೆ? ಅವನೊಂದಿಗೆ ಮರ, ಅಲ್ಲಲ್ಲ ಮಂಚ ಸುತ್ತಿದ ಲಲನಾ ಮಣಿಗಳನ್ನು ಪೊಲೀಸರು ಬುಲಾವ್ ಮಾಡಬಹುದೇ ನಿತ್ಯಾನಂದನನ performance evaluation ಮಾಡಲು?

ಭಾರತ ಒಂದು ದೊಡ್ಡ drama stage. ಯಾವ ಯಾವ ರೀತಿಯ, ವಿಶ್ವವೇ ಮೂಗಿನ ಮೇಲೆ ಬೆರಳಿಟ್ಟುಕೊಂಡು ಬೆರಗಾಗಿ ನೋಡುವ ಒಂದು ಡ್ರಾಮ ನಮ್ಮ ಭಾರತ.

ನೀವೇನಂತೀರಾ? ಏನಾದರೂ ಅನ್ನಿ, ತಮಾಷೆಗೆ ಕೂಡ ನಾನು ಗಂಡಲ್ಲ ಎನ್ನಬೇಡಿ ಮಾರಾಯ್ರೆ.

ಓಹ್, ನಿನ್ನ ಛಲವೇ

                                                      

ದಕ್ಷಿಣ ಕೊರಿಯಾದ ಮಹಿಳೆ ವಿಶ್ವದ ೧೪ ಶಿಖರಗಳನ್ನು ಮಣಿಸಿದ ಪರ್ವತ ನಾರಿ. 

ಧರೆಯ ಮೇಲಿನ ಹುಲು ಮಾನವರನ್ನು ಅಣಕಿಸುತ್ತಾ ಆಗಸಕ್ಕೂ ಸವಾಲಾದ ಗಿರಿ ಶಿಖರಗಳು ಈ ಮಹಿಳೆಯ ಅಸಾಧಾರಣ ವಿಶ್ವಾಸ, ಧೈರ್ಯಕ್ಕೆ ಮರುತ್ತರ ನೀಡದೆ ಶರಣಾದವು.  ೧೩ ಶಿಖರಗಳನ್ನು ಗೆದ್ದ ಈ ಮಹಿಳೆ ಕೊನೆಯದಾದ ೨೬,೨೪೭ ಅಡಿ ಎತ್ತರದ ಅನ್ನಪೂರ್ಣ ಶಿಖರವನ್ನು ಮೊಣಕಾಲೂರಿ ಜಯಿಸಿದಳು. ಮೊಣ ಕಾಲೂರಿದ್ದು ಈ ಕೆಚ್ಚ್ಚೆದೆಯ ನಾರಿಯಾದರೂ ವಾಸ್ತವವಾಗಿ ಮೊಣಕಾಲೂರಿ ಶರಣಾಗಿದ್ದು ಅನ್ನಪೂರ್ಣೆಯೇ.

ಓಹ್. ನಮ್ಮ ತೆಂಡೂಲ್ಕರ್ ಒಂದೊಂದೇ ದಾಖಲೆಗಳನ್ನ ಬೆನ್ನತ್ತುವಂತೆ 14 ಶಿಖರಗಳ ಮಣಿಸಿದ ಈಕೆಯ ಹೆಸರು “ಓಹ್ ಯೂನ್ ಸುನ್”. ಬಹುಶಃ ಅತ್ಯುತ್ಸಾಹದ, ಚಿಮ್ಮುವ ಹದಿಹರೆಯದ ಹೆಣ್ಣೋ, ಇಪ್ಪತ್ತರ ತಾರುಣ್ಯವೋ, ಮೂವತ್ತರ ಯೌವ್ವನವೋ ಅಲ್ಲ ಈಕೆಗೆ. ೪೪ ವರ್ಷ ವಯಸ್ಸಿನ ಕೊರಿಯಾದ ಈ ಮಹಿಳೆ ಇದೆ ಆಸುಪಾಸಿನ ವಯಸ್ಸಿನ ಜನರು ನಾಚುವಂಥ ಸಾಧನೆ ಮಾಡಿದಳು. ನಮ್ಮಲ್ಲಿ ೪೦ ಅಂದರೆ ಮುಗಿಯಿತು, ಅದರಲ್ಲೂ ನಮ್ಮ ಹೆಣ್ಣು ಮಕ್ಕಳಿಗಂತೂ ಮದುವೆಯಾಗಿ ಒಂದೆರಡು ಮಕ್ಕಳಾದ ಕೂಡಲೇ ವೈರಾಗ್ಯ ಆವರಿಸಿ ಬಿಡುತ್ತದೆ. ಇನ್ನು ಏನಾದರೂ ಧೈರ್ಯ ಮಾಡಿ ಮನಸ್ಸಿನ ಆಸೆಗಳನ್ನು ಪೂರೈಸುವತ್ತ ಯಾವುದಾದರೂ ಹೊಸ ಚಟುವಟಿಕೆ  ಆರಂಭಿಸಿದರಂತೂ ನೋಡುವವರಿಗೆ ಹೆಚ್ಚು ಕನಿಕರ. ಈ ವಯಸ್ಸಿನಲ್ಲಿ ಇದೆಲ್ಲಾ ಯಾಕೆ ಎಂದು ಉತ್ಸಾಹಕ್ಕೆ ತಣ್ಣೀರೆರೆಚಿ ಮೂಲೆ ತೋರಿಸುತ್ತಾರೆ ಕೂರಲು. ಆದರೆ ಈ ಡಬ್ಬಲ್ ನಾಲ್ಕು (೪೪) ಸಂಖ್ಯೆ ಈಕೆಯ ಉತ್ಸಾಹವನ್ನು ಕುಗ್ಗಿಸುವ ಬದಲು ಎತ್ತರ ಏರಲು ಪ್ರೇರೇಪಿಸಿತು. ಎತ್ತರ ಎಂದರೆ ಸಾವಿರಾರು ಅಡಿಗಳ ಎತ್ತರ. ಹಿಮಾಲಯ ಪರ್ವತ ಶ್ರೇಣಿ ಎಂಥವರ ಎದೆಯನ್ನೂ ನಡುಗಿಸುವಂಥದ್ದು. ಸಾವಿರಾರು ಜನ ಶಿಖರ ಏರಲು ಹೋಗಿ ಪ್ರಾಣ ಕಳೆದುಕೊಂಡವರು. ಅದರ ಮೇಲೆ ಏತಿ ಇದೆ, ಗೀತಿ ಇದೆ ಎಂದು ಭಯ ಹುಟ್ಟಿಸುವವರು ಬೇರೆ. ಆದರೆ ಸಾಧಿದಬೇಕು ಎಂದು ಛಲವಿರುವವರಿಗೆ ಛಲವೇ ಅವರ ಸಂಗಾತಿ, ನೆರಳಿನಂತೆ ಹಿಂಬಾಲಿಸುತ್ತದೆ.

ಆರೋಹಣ ಮಾಡಿದ ಕೂಡಲೇ ತನ್ನ ದೇಶದ ಬಾವುಟವನ್ನು ಬೀಸಿ ಹಿಡಿದ ಈಕೆಗೆ ದಕ್ಷಿಣ ಕೊರಿಯಾದ ಅಧ್ಯಕ್ಷರು ಅಭಿನಂದಿಸುತ್ತಾ ಹೇಳಿದ್ದು,

“She is really great and I’m proud of her,”  

ಈ ಮಹಿಳೆ ೨೦೦೪ ರಲ್ಲಿ ಎವೆರೆಸ್ಟ್ ಪರ್ವತವನ್ನು ಆರೋಹಣ ಮಾಡಿದ್ದಳು.  

ಚಿತ್ರ ಕೃಪೆ: ಯಾಹೂ

ಸೌದಿ ಅರೇಬಿಯಾದಲ್ಲಿ ಬಂದ್ ಗೆ ಕರೆ

ನಿರಂಕುಶ ರಾಜಪ್ರಭುತ್ವ ಇರುವ, democracy ಎಂದರೆ ಡೈನೋಸಾರಾ ಎಂದು ಗಾಭರಿಯಲ್ಲಿ ಕೇಳುವ ಅರೇಬಿಯಾದಲ್ಲಿ ಎಂಥ ಬಂದ್ ಎಂದಿರಾ? ನಮ್ಮಲ್ಲಿ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಅಥವಾ ವಿರೋಧಪಕ್ಷಗಳವರ ಜೀವ ಸುಟ್ಟು ತಿನ್ನಲು ನೀಡುವ ಕರೆಗೆ ಸ್ವಲ್ಪ ಭಿನ್ನ ಅರೇಬಿಯಾದ ಬಂದ್. ಎಷ್ಟೇ ಗಡಿಬಿಡಿ ಇದ್ದರೂ ನಮ್ಮನ್ನು ಸೃಷ್ಟಿಸಿ ಈ ಭೂಲೋಕಕ್ಕೆ ತಂದ ಆ ದೇವನನ್ನು ಆರಾಧಿಸಲು ಅಂಗಡಿ ಮುಂಗಟ್ಟುಗಳು ಬಂದ್ ಆಚರಿಸುತ್ತವೆ. ಬಹುತೇಕವಾಗಿ ಭಗವಂತನಿಗಾಗಿರುವ ಈ ಬಂದ್ ಸ್ವ-ಪ್ರೇರಣೆಯಿಂದ ನಡೆಯುತ್ತದೆ. ಕೆಲವೊಮ್ಮೆ “promotion of virtue and prevention of vice” department ಗೆ ಸೇರಿದ ಪೊಲೀಸರು (ಇವರನ್ನು “ಹಯ್ಯ” ಎಂತಲೂ ಕರೆಯುತ್ತಾರೆ) ಈ ಕಾನೂನನ್ನು ಜಾರಿ ಗೊಳಿಸುತ್ತಾರೆ. ಇವರ ಕೆಲಸವೇ ಜನರು ಪ್ರಾರ್ಥನೆಗೆ ಹೋಗುವಂತೆ ಮಾಡುವುದು.

ಪ್ರಥಮವಾಗಿ ಸೌದಿ ಅರೇಬಿಯಾಕ್ಕೆ ಬರುವವರಿಗೆ ಇದೊಂದು ವಿಚಿತ್ರ ವಿದ್ಯಮಾನವಾಗಿ ಕಾಣುತ್ತದೆ. ಪ್ರಪಂಚದಲ್ಲಿ ಬೇರಾವುದೇ ಮುಸ್ಲಿಂ ರಾಷ್ಟ್ರಗಳಲ್ಲೂ ಈ ರೀತಿಯ ವ್ಯವಸ್ಥೆಯಿಲ್ಲ. ಒಂದು ರೀತಿಯಲ್ಲಿ ಒಳ್ಳೆಯದೇ ಎಂದು ತೋರಿದರೂ ಬಹಳಷ್ಟು ಜನರಿಗೆ ಒಂಥರಾ ಕಿರಿಕಿರಿ. ಯಾವುದಾದರೂ ಕೆಲಕ್ಕೆಂದು ಹೊರಟರೆ ಆ ಸಮಯ ಪ್ರಾರ್ಥನೆಯ ಸಮಯವಾಗಿರುತ್ತದೆ. ಅದರಲ್ಲೋ ಚಳಿ ಗಾಳದಲ್ಲಿ ಸಂಜೆಯ ಮತ್ತು ರಾತ್ರಿಯ ಪ್ರಾರ್ಥನೆಗಳ ಮಧ್ಯೆ ಕೇವಲ ಒಂದು ಘಂಟೆಯ ಅಂತರ. ಅಂಥ ಸಮಯದಲ್ಲಿ ರಾತ್ರಿಯ ಪ್ರಾರ್ಥನೆ ಮುಗಿದ ನಂತರವೇ ಶಾಪಿಂಗ್ ಹೋಗುವುದು ಲೇಸು. ಜೆಡ್ಡಾ ರಾತ್ರಿ ಬದುಕಿಗೆ ಖ್ಯಾತ. ಬಹುತೇಕ ಅಂಗಡಿಗಳು ಮಧ್ಯ ರಾತ್ರಿ ವರೆಗೆ ತೆರೆದಿರುತ್ತವೆ, ಕೆಲವೊಂದು ಸೂಪರ್ ಮಾರ್ಕೆಟ್ ಗಳು ೨೪ ಘಂಟೆಯೂ ತೆರೆದಿರುತ್ತವೆ. ಹೀಗೆ ಪ್ರಾರ್ಥನೆಗೆಂದು ಅಂಗಡಿ ಮುಂಗಟ್ಟುಗಳು ಮುಚ್ಚುವ ಪರಿಪಾಠ ಕೆಲವರಿಗೆ ಬೇಸರ, ಕೋಪ ತರಿಸುತ್ತದೆ. any time is prayer time here ಎಂದು ಒಬ್ಬ ಬಿಳಿಯ ಅಸಹನೆಯಿಂದ ನನ್ನಲ್ಲಿ ಹೇಳಿದ. ಅವನೇಕೆ ನನ್ನ ಆರು ವರ್ಷದ ಮಗನೂ ಮೊನ್ನೆ ಇದೇ ರೀತಿಯ ಮಾತನ್ನಾಡಿದ. ಜರೀರ್ ಪುಸ್ತಕದಂಗಡಿ ನೋಡಿದಾಗೆಲ್ಲಾ ಅಪ್ಪ, ಜರೀರ್ ಗೆ ಹೋಗೋಣ ಬಾ (ಜರೀರ್ ಇಲ್ಲಿನ ಸುಪ್ರಸಿದ್ಧ ಪುಸ್ತಕ ಮಳಿಗೆ) ಎಂದು ಗೋಗರೆದಾಗ ಆ ಸಮಯ ಪ್ರಾರ್ಥನೆಯ ಸಮಯವಾಗಿರುತ್ತದೆ. i dont like salah, every day is salah time ಎಂದು ತನ್ನ ತನ್ನ ಹರುಕು ಮುರುಕು ಆಂಗ್ಲ ಭಾಷೆಯಲ್ಲಿ ಸಿಡಿದೇಳುತ್ತಾನೆ. ನನಗೆ “ಸಲಾ” ಇಷ್ಟವಿಲ್ಲ, ಯಾವಾಗ ನೋಡಿದರೂ ಸಲಾ ಸಮಯ ಎಂದು ಅವನು ಹೇಳುವ ರೀತಿ ಇದು.

“ಸಲಾ” ಎಂದರೆ ಅರಬಿ ಭಾಷೆಯಲ್ಲಿ “ಆರಾಧನೆ”. ನಾವು ನಮಾಜ್ ಎಂದು ಹೇಳುತ್ತೆವಲ್ಲ, ಅದು. ಸಲಾ ಎನ್ನುವ ಪದ “ಸಿಲ್” ಎನ್ನುವ ಪದದಿಂದ ಬಂದಿದ್ದು ಮತ್ತು “ಸಿಲ್” ಎಂದರೆ ಸಂಪರ್ಕ ಅಂತ. ವಾಹ್, ನಮ್ಮನ್ನು ಮಣ್ಣಿನಿಂದ ಸೃಷ್ಟಿಸಿ, ದೇವದೂತರಿಂದ ನಮಗೆ ಸಾಷ್ಟಾಂಗ ಮಾಡಿಸಿ ಅವನ ಉತ್ತಾರಾಧಿಕಾರಿಯಾಗಿ ಭೂಲೋಕ ಆಳಲು ಕಳಿಸಿದ ಪರಮಾತ್ಮನೊಂದಿಗೆ ಸಂಪರ್ಕ. ನೇರ ಸಂಪರ್ಕ. ಯಾರ ಮಧ್ಯಸ್ಥಿಕೆಯೂ ಇಲ್ಲದ ನೇರ ಒಡನಾಟ.ಇಂಥ ಪರಮಾತ್ಮನಿಗೆ ಸಾಷ್ಟಾಂಗ ಎರಗಲು ಸಮಯ ನಿಗದಿ ಪಡಿಸಿದರೆ ನಮ್ಮ ಶಾಪ್ಪಿಂಗ್ ತೆವಲಿಗೆ ಇದು ಅಡ್ಡ ಎಂದು ಅದರ ವಿರುದ್ಧ ನಮ್ಮ ತಗಾದೆ.

ನೀವು ಶಾಪಿಂಗ್ ಮಾಡುತ್ತಿರುವಾಗ ನಮಾಜಿನ ಕರೆ ಮೊಳಗಿದರೂ ನಿಮ್ಮನ್ನು ಹೊರಗಟ್ಟುತ್ತಾರೆ. ನೀವು ಗೋಣಿ ಚೀಲ ಭರ್ತಿ ರೊಕ್ಕ ಇಟ್ಟುಕೊಂಡು ಹೋಗಿದ್ದರೂ ಆ ಹಣ ಅಂಗಡಿಯವನಿಗೆ ಬೇಡ. ಮೊದಲು ಪ್ರಾರ್ಥನೆ ನಂತರ ನಿನ್ನ ವ್ಯಾಪಾರ ಎನ್ನುತ್ತಾರೆ. ಅಷ್ಟೊಂದು ಭಯ ಕಾನೂನಿನದು. ಪೊಲೀಸರು ಬಂದರೆ ಸರಿಯಾದ ದಂಡ ವಿಧಿಸುತ್ತಾರೆ ಎಂದು ಭಯ. ಕೆಲವೊಮ್ಮೆ ನನಗೂ ಅನ್ನಿಸುವುದುಂಟು. ಭಗವಂತನ ಆರಾಧನೆಗೆ ಮೂರನೆಯವರ ಬಲವಂತ ಏಕೆ ಎಂದು.

ಜೆಡ್ಡಾದಲ್ಲಿ ಸಾರಿಗೆ ತಡೆ ಸಿಕ್ಕಾಪಟ್ಟೆ. ಎಲ್ಲರ ಹತ್ತಿರವೂ ಕಾರು. ಇಲ್ಲದೆ ಏನು, ಪೆಟ್ರೋಲ್ ಒಂದು ಲೀಟರ್ ಗೆ ಇಲ್ಲಿನ ೪೫ ಪೈಸ (ಭಾರತದ ಐದು ರೂಪಾಯಿಗಿಂತ ಕಡಿಮೆ). ಕಾರನೂ ಸಾಕುವುದು ಸುಲಭ ತಾನೇ. ಹೀಗೆ ಈ ಟ್ರಾಫಿಕ್ ಅನ್ನು ದಾಟಿಕೊಂಡು ಅಂಗಡಿ ಸೇರಿದೆವು ಅನ್ನುವಷ್ಟರಲ್ಲಿ ಸಲಾ ಟೈಂ. ಕೆಲವೊಮ್ಮೆ ಶಾಪಿಂಗ್ ಮಧ್ಯೆ ನಮಾಜಿನ ಸಮಯವಾದರೂ ನಿರ್ದಾಕ್ಷಿಣ್ಯದಿಂದ ಹೊರಗಟ್ಟುತ್ತಾರೆ. ಆದರೆ ಎಲ್ಲಾ ಮಾಲುಗಳಲ್ಲೂ, ಇನ್ನಿತರ ಸ್ಥಳಗಳಲ್ಲೂ ಆರಾಧನೆಗೆ ವಿಶೇಷ ಸೌಲಭ್ಯವಿದೆ. ಏನಿಲ್ಲವೆಂದರೂ ಪ್ರತಿಯೊಬ್ಬರ ಕಾರಿನಲ್ಲಿ ಚಿಕ್ಕ ಕಂಬಳಿ (prayer rug) ಇರುತ್ತದೆ. ಎಲ್ಲಿ ನಿಂತಿರುತ್ತಾರೋ ಅಲ್ಲೇ ಹಾಸಿ ಭಗವಂತನ ಸ್ತುತಿ ಮಾಡುತ್ತಾರೆ.      

ಒಮ್ಮೆ ನಾನು ನನ್ನ ಸೋದರಿಯ ಟಿವಿ ರೆಪೇರಿ ಮಾಡಿಸಲೆಂದು “ಬಲದ್” ಎಂದು ಕರೆಯಲ್ಪಡುವ ಜೆಡ್ಡಾ ನಗರದ ಪ್ರಮುಖ ಆಕರ್ಷಣೆಯ ವಲಯಕ್ಕೆ ಹೋದೆ. ಆಗ ತಾನೇ ಸೂರ್ಯ ಅಸ್ತಮಿಸುತ್ತಿದ್ದ. ಸೂರ್ಯಾಸ್ತಮಾನದ ಪ್ರಾಥನೆಯ ಸಮಯ ಇನ್ನೂ ಸ್ವಲ್ಪ ಹೊತ್ತಿನಲ್ಲಿ ಶುರು ಆಗುವುದರಲ್ಲಿತ್ತು. ಅಷ್ಟರಲ್ಲೇ ಅಂಗಡಿ ತಲುಪಿದ ನಾನು ಅಂಗಡಿಯವನಿಗೆ ಟಿವಿ ಒಪ್ಪಿಸಿ ಬೇಕಾದ ಕಾಗದ ಅವನಿಂದ ಪಡೆದು ಅಂಗಡಿ ಹೊರಗೆ ಕಾಲಿಡುವಷ್ಟರಲ್ಲಿ ಬಂದರು ಪೊಲೀಸರು. ಅಂಗಡಿಯ ಮುಂದೆ ಜೀಪ್ ನಿಲ್ಲಿಸಿದ್ದೆ, ಧಡ ಧಡ ಇಳಿದು ನನ್ನನ್ನೂ, ಅಂಗಡಿಯ ಬಾಗಿಲು ಹಾಕುತ್ತಿದ್ದವನನ್ನೂ, ಇನ್ನಿಬ್ಬರನ್ನೂ ಜೀಪ್ ಹತ್ತಿಸಿದರು. ನಾವು ಪ್ರಾಥನೆಗೆ ಹೋಗಲೇ ಹೊರಟಿದ್ದು ಎಂದು ಹೇಳಿದರೂ ಕೇಳದೆ ನಮ್ಮಿಂದ ನಮ್ಮ ಗುರುತು ಚೀಟಿ ಪಡೆದುಕೊಂಡು ಓಡಿಸಿದರು ಜೀಪನ್ನು ಹತ್ತಿರದಲ್ಲೇ ಇದ್ದ ಮಸೀದಿಗೆ. ನನ್ನೊಂದಿಗೆ ಇದ್ದ ನಮ್ಮ ಆಫೀಸಿನ ಹುಡುಗನೊಬ್ಬ ಹೆದರಿ ಈಗೇನಾಗಬಹುದು ಎಂದು ಕಣ್ ಸನ್ನೆಯಿಂದ ಕೇಳುತ್ತಿದ್ದ. ಪಾಪ ಅವನು ಭಾರತದಿಂದ ಬಂದ ಹೊಸತು. ಎಂಥ ಸ್ವಾಗತ ಸಿಕ್ಕಿದೆ ಇವನಿಗೆ ಎಂದು ನನಗೆ ಒಂದು ಕಡೆ ನಗು, ಮತ್ತೊಂದು ಕಡೆ ಕನಿಕರ. ನನಗಂತೂ ಇಂಥವನ್ನು ಕೇಳಿ, ಓದಿ ಸಾಕಷ್ಟು ಪರಿಚಯವಿತ್ತು. ನಾವೇನೂ ಕಳ್ಳ ಕಾಕರಲ್ಲವಲ್ಲ. ಭಯ ಏಕೆ ಎಂದು ಅವರು ತಂದು ಬಿಟ್ಟ ಮಸೀದಿಯ ಬಳಿ ಇಳಿದೆ. ಪೊಲೀಸ್ ಜೀಪಿನಿಂದ ಇಳಿದ ನಮ್ಮನ್ನು ನೋಡಲು ಜನರಿಗೆ ಒಂಥರಾ ಮೋಜು. ಆಹಾ, ನಮಾಜ್ ಮಾಡದೆ ಅಡ್ಡಾಡುತ್ತೀರಾ  ಎಂದು ತುಂಟತನದಿಂದ ನಮ್ಮೆಡೆ ನೋಟ ಬೀರಿ ನಗುತ್ತಿದ್ದರು. ಒಂದು ರೀತಿಯ ಅವಮಾನ ತಾನೇ? ನಮಾಜಿನ ಸಮಯದಲ್ಲಿ ನಮಾಜ್ ಮಾಡುವುದು ಬಿಟ್ಟು ಟಿವಿ ರೆಪೇರಿ, ಮತ್ತೇನೋ ಕೆಲಸ. ಸರಿ ನಾವು ಓಡಿ ಹೋಗದಂತೆ ನಮ್ಮ ಗುರುತಿನ ಚೀಟಿ ಜಪ್ತಿ ಆಗಿದೆಯಲ್ಲ. ನಾವು ನಮಾಜ್ ಮಾಡಿ ಜೀಪಿನ ಹತ್ತಿರ ಬಂದು ಪೊಲೀಸರೊಂದಿಗೆ ನಮ್ಮ ಯಾತ್ರೆ ಠಾಣೆಯ ಕಡೆ. ನಮಾಜ್ ಮಾಡಿಸಿ ಸುಮ್ಮನೆ ತಾಂಬೂಲ ಕೊಟ್ಟು ಕಳಿಸುವುದಿಲ್ಲ. ಠಾಣೆಗೆ ಹೋಗಬೇಕು. ಸರಿ ಠಾಣೆ ತಲುಪಿದೆವು. ಅಲ್ಲಿದ್ದ ಅಧಿಕಾರಿ ಸೌಮ್ಯವಾದ ಸ್ವರದಲ್ಲಿ ಕೇಳಿದ ನಮಾಜ್ ಮಾಡಲು ಎಂದು ಧಾಡಿ ಎಂದು. ನಾವು ನಮ್ಮ ಕಾರಣವನ್ನು ಹೇಳುತ್ತಿದ್ದಂತೆ ಅದೇನನ್ನೋ ಅರಬ್ಬೀ ಭಾಷೆಯಲ್ಲಿ ಬರೆದು ಸಹಿ, ಹೆಬ್ಬಟ್ಟು ಒತ್ತಿಸಿಕೊಂಡು ಬಿಟ್ಟರು. ಯಾರೋ ಹೇಳಿದರು ಈ ರೀತಿ ಮೂರು ಬಾರಿ ನಮ್ಮ ಹೆಸರು ದಾಖಲಾದರೆ ಗಡೀಪಾರಂತೆ. ನಮ್ಮ ಕಾರಿನಿಂದ ಬಹು ದೂರ ಬಂದಿದ್ದೆವು. ಅವರೇನು ನಮ್ಮನ್ನು ಕರೆತಂದ ಸ್ಥಳಕ್ಕೆ ಬಿಡಲು ಅವರ ಬೀಗರೇ ನಾವು? ಟ್ಯಾಕ್ಸಿ ಹಿಡಿದು ನನ್ನ ಕಾರಿರುವ ಸ್ಥಳಕ್ಕೆ ಬಂದೆ. ಇಷ್ಟು ಸುಲಭವಾಗಿ ಸಮಸ್ಯೆ ಪರಿಹಾರವಾಗಿದ್ದು ನಮ್ಮ ಪುಣ್ಯವೆಂದೇ ಹೇಳಬೇಕು. ಮತ್ತೇನು ನೇಣು ಹಾಕುತ್ತಿದ್ದರಾ ಎಂದು ಕೇಳಬೇಡಿ. ನಮಾಜ್ ಮಾಡಿಸಿ, ಠಾಣೆಗೆ ತಂದ ನಂತರ ಕೆಲವು ತಲೆ ಕೆಟ್ಟ ಪೊಲೀಸರು ಅವರದೇ ಆದ ರೀತಿಯಲ್ಲಿ ರಾಟೆ ಏರಿಸುತ್ತಾರೆ. ಅಂದರೆ ನಿಮಗೆ ನಮಾಜ್ ಗೊತ್ತಲ್ಲ. ನಿಲ್ಲುವುದು, ಬಾಗುವುದು, ಸಾಷ್ಟಾಂಗ ಎರಗುವುದು, ನಂತರ ಮಗುದೊಮ್ಮೆ ನೇರವಾಗಿ ನಿಲ್ಲುವುದು. ಒಂದು ರೀತಿಯ ಶಾಸ್ತ್ರೀಯ ನೃತ್ಯ, ಕ್ಷಮಿಸಿ ಶಾಸ್ತ್ರೀಯ ಭಸ್ಕಿ. ಹೀಗೆ ಮೂರು ಸಲ ಆವರ್ತಿಸಿದಾಗ ಸೂರ್ಯಾಸ್ತಮಾನದ ನಮಾಜ್ ಮುಗಿದಂತೆ.  ಈ ರೀತಿಯ ಬಾಗುವುದು, ಏಳುವುದು ಈ ಸರ್ಕಸ್ಸನ್ನು ಸುಮಾರು ಐವತ್ತೋ, ನೂರೋ ಸಲ ಮಾಡಿಸಿ ಬಿಡುತ್ತಾರೆ. ಅದಾದ ಮೇಲೆ ಆಗುವ ಗತಿ ಗೊತ್ತೇ ಇದೆಯಲ್ಲ, ಅನುಭವ ಚಿತ್ರದಲ್ಲಿ ಕಾಶೀನಾಥ್ ಹುಡುಗಿಯರನ್ನು ಪಟಾಯಿಸಲು ಬಾಡಿ ಬಿಲ್ಡ್ ಎಂದು ಭಸ್ಕಿ ಜೋರಾಗಿ ಹೊಡೆದು ನಡೆದ ಶೈಲಿ. ಆ ಗತಿ ನಮಾಜ್ ಮಾಡದವನಿಗೆ. ದೇವರಾದರೂ ಕನಿಕರ ತೋರಿಸಿಯಾನು, ಪೊಲೀಸರು ತೋರಿಸುವುದಿಲ್ಲ.

ಜನರಿಂದ ನಮಾಜ್ ಮಾಡಿಸಿದ ಈ ಪೊಲೀಸರು ಬಿಡುವಿದ್ದರೆ ಮಾಲ್ ಗಳಿಗೆ ಹೋಗುತ್ತಾರೆ ಚೇಷ್ಟೆಗೆಂದು ಬರುವ ಪಡ್ಡೆ ಹುಡುಗ ಹುಡುಗಿಯರಿಗಾಗಿ. ಸ್ವಲ್ಪ ಅನುಮಾನ ಕಂಡರೂ ಸಾಕು ಅವರನ್ನು ಕರೆದು ತಾಕೀತು ಮಾಡುತ್ತಾರೆ, ಇಲ್ಲಾ ಭಸ್ಕಿ ಹೊಡೆಸಿ ಗೋಳು ಹೊಯ್ದುಕೊಳ್ಳುವ ಪೋಲೀಸರಾದರೆ ಅಪ್ಪಂದಿರನ್ನು ಕರೆಸುತ್ತಾರೆ ಠಾಣೆಗೆ. ಜನ್ಮ ಕೊಟ್ಟರೆ ಸಾಲದು, ಸರಿಯಾಗಿ ಸಾಕಬೇಕು ಎಂದು ಬುದ್ಧಿ ಹೇಳಲು. ಇವರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ, ಏಕೆಂದರೆ ಇವರ ವಿರುದ್ಧ ನೀವು ನ್ಯಾಯಾಲಯದ ಮೆಟ್ಟಿಲು ಹತ್ತಿದರೂ ಪ್ರಯೋಜನವಿಲ್ಲ, ನ್ಯಾಯ ಹೇಳುವವನೂ ಇವರ ವರ್ಗಕ್ಕೇ ಸೇರಿದವನು. 

ಒಮ್ಮೆ ನಗರದ ಮಧ್ಯ ಭಾಗದಲ್ಲಿರುವ ಹಿರಾ ಮಾಲ್ನಲ್ಲಿ ಅಡ್ಡಾಡುತ್ತಾ ಇರುವಾಗ ಕಂಡಿದ್ದು. ನಾಲ್ಕು ಜನ ಹುಡುಗರು ಬೆರ್ಮುಡ, ಉದ್ದದ ಕೂದಲು, ಕೊರಳಿಗೆ ಸರ, ಕೈಗೆ ಕಡಗ ಹೀಗೆ ಒಂದು ಥರಾ ಜಿಪ್ಸಿ ಗಳ ಥರಾ ನಡೆಯುತ್ತಿದ್ದರು. ಆಗಮನವಾಯಿತು ಈ ಪೊಲೀಸರದು.  ಸಮಾಜದಲ್ಲಿ ನೈತಿಕತೆ ಕಾಪಾಡಲು ನಿಯಮಿಸಲ್ಪಟ್ಟ “ಮುತಾವಾ”ಗಳು. ಆ ಹುಡುಗರನ್ನು ನಿಲ್ಲಿಸಿ ಶುರು ಮಾಡಿದರು ಪ್ರಶ್ನೆಗಳನ್ನು. ಕೂದಲು ಹೀಗೇಕೆ ಬಿಟ್ಟಿದ್ದೀಯ, ಇದೇನು ನಿನ್ನ ಅವತಾರ, ನೀವೆಲ್ಲಿ ವಾಸವಾಗಿದ್ದೀರಾ….. ಹುಡುಗರು ಭಯದಿಂದ ಕೇಳಿದ ಪ್ರಶ್ನೆಗಳಿಗೆ ತಡಬಡಿಸಿ ಉತ್ತರಿಸಿ ಇನ್ನು ಈ ವೇಷದಲ್ಲಿ ನಾವು ಅಡ್ಡಾಡುವುದಿಲ್ಲ ಎಂದು ಹೇಳಿ ಅವರ ಕೈಗಳಿಂದ ತಪ್ಪಿಸಿಕೊಂಡರು. ಕೆಲವೊಮ್ಮೆ ಇಷ್ಟರಲ್ಲೇ ನಿಲ್ಲುತ್ತದೆ ಈ ವಿಚಾರಣೆ, ಒಂದಿಷ್ಟು ಕೌನ್ಸೆಲಿಂಗ್ನೊಂದಿಗೆ. ಒಂದು ದಿನ ನಾನು ನನ್ನ ಶ್ರೀಮತಿ ಮಕ್ಕಾದ ಮಸೀಯಿಂದ ಹೊರ ನಡೆಯುತ್ತಿದ್ದಾಗ ಬಂದ ಇಂಥದ್ದೇ ಒಬ್ಬ ಪೋಲೀಸಪ್ಪ. ನನ್ನನ್ನು ತಡೆದು ನಿನ್ನ ಪತ್ನಿಯೇಕೆ perfume ಧರಿಸಿದ್ದಾಳೆ ಎಂದು. ನೀನೆಕಪ್ಪ ನನ್ನ ಹೆಂಡತಿಗೆ ಮೂಗು ತಾಗಿಸಿದ್ದು ಎಂದು ಕೇಳಲು ಮನಸ್ಸಾದರೂ ನಿನ್ನ ಮೂಗಿಗೆ ಬಡಿದಿದ್ದು ನನ್ನ Mont Blanc ಪರ್ಫ್ಯೂಂ ಎಂದು ಹೇಳಿ ಮುಂದೆ ನಡೆದೆ. ಸ್ತ್ರೀಯರು ಸುಗಂಧ ದ್ರವ್ಯ ಹಚ್ಚಿಕೊಳ್ಳಬಾರದು, ಅದು ಪರ ಪುರುಷರಿಗೆ open invitation.

ಕೆಲವೊಮ್ಮೆ ನವಿರಾಗಿ ವರ್ತಿಸುವ “ಮುತಾವಾ” ಎಂದೂ ಕರೆಯಲ್ಪಡುವ ಈ ಸಮಾಜ ಸುಧಾರಕರಿಂದ  ಸಮಾಜಕ್ಕೇನೋ ಒಳ್ಳೆಯದೇ. ಇಲ್ಲಿನ ನಿಯಮಿತ ಸ್ವಾತಂತ್ರ್ಯದ ಚೌಕಟ್ಟಿನೊಳಗೆ ಅನಿಯಮಿತವಾಗಿ ವರ್ತಿಸುವ ಯುವ ವರ್ಗಕ್ಕೆ, ಯೌವ್ವನದ ಎಗ್ಗಿಲ್ಲದ ರಭಸಕ್ಕೆ  ತಡೆ ಒಡ್ಡುವ ಇಂಥ road hump ಗಳು ಅವಶ್ಯಕ.

ಸೌದಿ ಅರೇಬಿಯಾದಲ್ಲಿ ಆಗುವ ಭಗವಂತನ ನಾಮ ಸ್ಮರಣೆ ಬೇರಾವ ದೇಶದಲ್ಲೂ ಆಗಲಿಕ್ಕಿಲ್ಲವೇನೋ. ರಸ್ತೆ ಬದಿಯಲ್ಲಿ, ಬ್ಯಾಂಕಿನಲ್ಲಿ ಸರತಿಯಲ್ಲಿ ನಿಂತಾಗ, ಜಾಹೀರಾತಿನ ಮಧ್ಯೆ ಹೀಗೆ ಎಲ್ಲೆಡೆ ದೇವರನ್ನು ಸ್ಮರಿಸಲು, ಕೊಂಡಾಡಲು ಕರೆ. ಹೀಗೆ ಸದಾ ದೇವನಾಮ ಸ್ಮರಣೆ ಮಾಡುವ ಸಮಾಜ ಅದೇ ದೇವನ ಆದೇಶವನ್ನು ಕಡೆಗಣಿಸುವುದರಲ್ಲೂ ಮುಂದು ಎಂದರೆ ನಿಮಗೆ ಅಚ್ಚರಿ ಆಗಬಹುದು. ಈ ದ್ವಂದ್ವ ನಮಗೆ ಹೇರಳವಾಗಿ ಈ ಮರಳುಗಾಡಿನಲ್ಲಿ ಕಾಣಲು ಸಿಗುತ್ತದೆ.

ಧರ್ಮ ಮತ್ತು ಹಿಂಸೆ

“ಜಗತ್ತಿನಲ್ಲಿನ ಜಿಹಾದ್ ಮೂಲಕ “ಕಾಷಿರ್”(ಸುಳ್ಳು ದೇವರ ಆರಾಧಕರು ಅಥವಾ false religion worshipers) ಜನರನ್ನು ಕೊಂದು ನಮ್ಮ ಸತ್ಯ ಮತ್ತು ಏಕೈಕ ದೇವರ ಸಾಮ್ರಾಜ್ಯವನ್ನು ಸ್ಥಾಪಿಸಬೇಕು ಎಂದು ನಂಬುತ್ತದೆ” ಎಂದು ಅಂತರ್ಜಾಲದ ಮಾಧ್ಯಮವೊಂದರಲ್ಲಿ ಒಬ್ಬರ ಅಭಿಪ್ರಾಯ. ಮೇಲಿನ ಹೇಳಿಕೆ ನನ್ನ ಪ್ರಕಾರ ಬಾಲಿಶ. ಭಯೋತ್ಪಾದನೆ ಇಸ್ಲಾಂ ಧರ್ಮ ವಿರೋಧಿ ಎಂದು ಭಾರತದ ಮಾತ್ರವಲ್ಲ ಜಗತ್ತಿನ ಎಲ್ಲಾ ಮುಸ್ಲಿಮ ಧರ್ಮಗುರುಗಳು (ಉಲೇಮ) ಹೇಳಿಕೆ ನೀಡಿದ್ದಾರೆ. “ಕಾಫಿರ್” ಅನ್ನುವ ಪದದ ಬಗ್ಗೆ ಬಹಳಷ್ಟು ವಿವಾದಗಳಿವೆ. ಮುಸ್ಲಿಮೇತರರನ್ನು ಕಾಫಿರರೆಂದು ತೆಗಳಬಾರದು ಮತ್ತು ಸಂಬೋಧಿಸಬಾರದೆಂದು ಮುಸ್ಲಿಂ ಪಂಡಿತರ ಅಭಿಪ್ರಾಯ. ಅಷ್ಟಕ್ಕೂ ಕಾಫಿರ್ ಅನ್ನುವ ಪದಕ್ಕೆ ಹಲವು ಅರ್ಥಗಳಿವೆ. ಕಾಫಿರ್ ಅಂದರೆ “ವಿರೋಧಿಸುವವ” ಮತ್ತು “ಮರೆಮಾಚುವವ” ಎಂದೂ ಅರ್ಥೈಸುತ್ತಾರೆ. ಹೊಲದಲ್ಲಿ ರೈತ ಬೀಜ ಬಿತ್ತುವುದಕ್ಕೆ “ಕುಫ್ರ್” (ಕಾಫಿರ್ ನ ಮೂಲ ಪದ “ಕುಫ್ರ್”) ಎನ್ನುತ್ತಾರೆ, ಅಂದರೆ ಆತ ಬೀಜವನ್ನು ಬಿತ್ತಿ ಮಣ್ಣಿನಿಂದ ಮುಚ್ಚುತ್ತಾನೆ ಎಂದು ಅರ್ಥ. ನಿತ್ಯ ಜೀವನದಲ್ಲಿ ಮುಸ್ಲಿಮರನ್ನು ಧ್ವೇಷದಿಂದ ನಾವು ಸಾಬ, ತುರ್ಕ, ಮುಸಲ, “ಹಲಾಲ್ ಖೋರ್” (ಸಂಪದದಲ್ಲಿ ಕೇಳಿದ್ದು) ಹೀಗೆ ವಿವಿಧ ನಾಮಾವಳಿಗಳಿಂದ ಕರೆದು ಹಿಗ್ಗುವುದು ಒಂದು ಪರಿಪಾಠವಾದಾಗ ಹಾಗೆ ಕರೆಯುವವರನ್ನು ಬಹುಶಃ ಮುಸ್ಲಿಮರು ಬೇಸರದಿಂದ ಕಾಫಿರರೆಂದು ಕರೆಯುತ್ತಾರೇನೋ. ಆದರೂ ಬಹುಪಾಲು ಮುಸ್ಲಿಮರು ಹಿಂದೂಗಳನ್ನು ಹಾಗೆ ಕರೆಯುವುದನ್ನು ನಾನು ಕೇಳಿಲ್ಲ. (personally, any amount of provocation will not entice or induce me to label people as kafirs) ಒಬ್ಬನ ಮನಸ್ಸನ್ನು ನೋಯಿಸುವುದು, ಘಾಸಿಗೊಳಿಸುವುದು ಒಂದು ಮಸೀದಿಯನ್ನು ಕೆಡವಿದಂತೆ ಎಂದು ಹಿರಿಯರು ಹೇಳುತ್ತಾರೆ. ಅಂಥ ಉನ್ನತ ಸಂಸ್ಕಾರದಲ್ಲಿ ಮಿಂದ ಒಬ್ಬ ವ್ಯಕ್ತಿ ಯಾರ ಮನಸ್ಸನ್ನೂ ನೋಯಿಸುವುದಿಲ್ಲ.

“ಸೆಮೆಟಿಕ್” ಧರ್ಮಗಳು ಎಂದರೆ ಪ್ರವಾದಿ ಅಬ್ರಹಾಮರ ಧರ್ಮವನ್ನು ನಂಬಿ ನಡೆಯುವವರು ಎಂದು ಸಾಮಾನ್ಯ ತಿಳಿವಳಿಕೆ. ಸೆಮೆಟಿಕ್ ಪದಕ್ಕೆ ಬಹು ದೊಡ್ಡ ವ್ಯಾಖ್ಯಾನವಿದೆ. ಯಹೂದ್ಯ, ಕ್ರೈಸ್ತ, ಇಸ್ಲಾಂ ಧರ್ಮಗಳು ಸೆಮೆಟಿಕ್. ಆದರೂ ಸಹ ಕ್ರೈಸ್ತರು ಮತ್ತು ಯಹೂದ್ಯರು ಇಸ್ಲಾಮ್ ಧರ್ಮವನ್ನ ಸೆಮೆಟಿಕ್ ಎಂದು ಭಾವಿಸುವುದಿಲ್ಲ. ಇಸ್ಲಾಂ ಯಹೂದ್ಯರ “ಮೋಸೆಸ್”, ಮತ್ತು ಕ್ರೈಸ್ತರ “ಏಸು” ಇವರುಗಳನ್ನು ದೇವನ ಸಂದೇಶವಾಹಕರು ಎಂದು ನಂಬಿ ಗೌರವಿಸುತ್ತಾರೆ. ಅವರುಗಳನ್ನು ಏಕ ವಚನದಲ್ಲೂ ಸಂಬೋಧಿಸುವುದಿಲ್ಲ. ಅವರ ಹೆಸರುಗಳನ್ನು ತಮ್ಮ ಮಕ್ಕಳಿಗೆ ನಾಮಕರಣವನ್ನೂ ಮಾಡುತ್ತಾರೆ.(ನನ್ನ ಮಗಳ ಹೆಸರು “ಇಸ್ರಾ ಮರ್ಯಮ್”. ಮರ್ಯಮ್, ಯೇಸು ಮಾತೆ) ಪ್ರವಾದಿಗಳು ಯಹೂದ್ಯರನ್ನು ಮತ್ತು ಕ್ರೈಸ್ತರನ್ನು “ಒಡಂಬಡಿಕೆಗಳ ಜನ” ಎಂದು ಅವರನ್ನು ಗೌರವದಿಂದ ನಡೆಸಿ ಕೊಂಡಿದ್ದು ಮಾತ್ರವಲ್ಲ ಅವರೊಂದಿಗೆ ವ್ಯವಹಾರವನ್ನೂ ನಡೆಸುತ್ತಿದ್ದರು. ಪವಿತ್ರ ಕುರಾನಿನಲ್ಲಿ ಯಹೂದ್ಯರನ್ನು, ಕ್ರೈಸ್ತರನ್ನೂ, ಸೇಬಿಯನ್ನರನ್ನೂ “ಗ್ರಂಥಗಳ ಸಮುದಾಯ” ಎಂದು ಸಂಬೋಧಿಸಿದ್ದರಿಂದ ಅವರ ಮೇಲೆ unprovoked ಆಕ್ರಮಣ ಮಾಡುವಂತಿಲ್ಲ. ಧರ್ಮ ಯುದ್ಧ ಗಳ ಸಮಯದಲ್ಲಿ ಯಾವುದೇ ಕಾರಣಕ್ಕೂ ಇಗರ್ಜಿ, ಮತ್ತು ಕ್ರೈಸ್ತ ಸಂತರು ವಾಸಿಸುವ ನಿವಾಸಗಳ ಮೇಲೆ ಆಕ್ರಮಣ ಕೂಡದು ಎಂದು ಸ್ಪಷ್ಟವಾಗಿ ಇಸ್ಲಾಮಿನ ಪ್ರಥಮ ಖಲೀಫಾ ಅಬೂ ಬಕ್ಕರ್ ನಿರ್ದೇಶಿಸಿದ್ದರು.

ಇಸ್ಲಾಮಿನ ಎರಡನೇ ಖಲೀಫಾ ಉಮರ್ ಮುಸ್ಲಿಂ ಸೇನೆ ವಶಪಡಿಸಿಕೊಂಡ ಜೆರುಸಲೆಂ ನಗರಕ್ಕೆ ಭೇಟಿ ಕೊಟ್ಟಾಗ ಅಲ್ಲಿನ ಇಗರ್ಜಿಗೆ ಹೋಗಿ ಧರ್ಮಗುರುಗಳನ್ನು ಭೇಟಿಯಾಗುತ್ತಾರೆ. ಸ್ವಲ್ಪ ಹೊತ್ತಿನಲ್ಲೇ ಪ್ರಾರ್ಥನೆಯ ಕರೆ ಕೇಳಿಬರುತ್ತದೆ. ಕೂಡಲೇ ಪಾದ್ರಿ ಉಮರ್ ರವರಿಗೆ ಪ್ರಾರ್ಥಿಸಲೆಂದು ಕಂಬಳಿಯನ್ನು ಇಗರ್ಜಿಯಲ್ಲೇ ಹಾಸುತ್ತಾರೆ. ಸೌಮ್ಯವಾಗಿ ನಿರಾಕರಿಸಿದ ಉಮರ್ ಇಗರ್ಜಿಯಿಂದ ಹೊರಕ್ಕೆ ಸ್ವಲ್ಪ ದೂರ ಹೋಗಿ ನಮಾಜ್ ನಿರ್ವಹಿಸುತ್ತಾರೆ. ಆಗ ಪಾದ್ರಿ ಕೇಳುತ್ತಾರೆ, ಖಲೀಫಾ ಉಮರ್, ಏಕೆ ಇಗರ್ಜಿಯಲ್ಲಿ ನಮಾಜ್ ಮಾಡಕೂಡದು ಎಂದೇನಾದರೂ ಇಸ್ಲಾಮಿನಲ್ಲಿ ಇದೆಯಾ ಎಂದು. ಆಗ ಉಮರ್ ಹೇಳುತ್ತಾರೆ, ಹಾಗೇನಿಲ್ಲ, ಆದರೆ ನಾನು ಇಗರ್ಜಿಯಲ್ಲಿ ನಮಾಜ್ ಮಾಡಿದ ಕಾರಣಕ್ಕೆ ಭವಿಷ್ಯದಲ್ಲಿ ಧರ್ಮದ ತಿರುಳರಿಯದ ಮುಸ್ಲಿಂ ಮತಾಂಧರು ಈ ಇಗರ್ಜಿಯನ್ನೇ ಕೆಡವಿ ಮಸೀದಿ ನಿರ್ಮಿಸಬಹುದು ಎನ್ನುವ ಆತಂಕದಿಂದ ನಾನು ಬಯಲಿನಲ್ಲಿ ನಮಾಜ್ ಮಾಡಿದೆ ಎಂದು ಹೇಳುತ್ತಾರೆ. ಈ ಮಹಾನ್ ಚೇತನ ಆಡಿದ ಇಂಥ ಮಾತಿಗೆ ಸರಿಸಾಟಿಯಾದ ಒಂದೇ ಒಂದು ಮಾತನ್ನು ಚರಿತ್ರೆಯಿಂದ ಹೆಕ್ಕಿ ತೋರಿಸಲು ನಮಗೆ ಸಾಧ್ಯವಾಗದು.

ಸೆಮೆಟಿಕ್ ಧರ್ಮಗಳು ಹಿಂಸೆ ಯನ್ನು ಪ್ರೋತ್ಸಾಹಿಸುತ್ತವೆ ಎಂದು ಹೇಳುವುದು ಅಜ್ಞಾನದ ಕುರುಹು. ಮೇಲಿನ ಪರಧರ್ಮ ಸಹಿಷ್ಣುತೆಯ ಒಂದಲ್ಲ, ಲೆಕ್ಕವಿಲ್ಲದ ಉದಾಹರಣೆಗಳು ಇಸ್ಲಾಮೀ ಚರಿತ್ರೆಯಲ್ಲಿ ನಮಗೆ ಕಾಣಲು ಸಿಗುತ್ತವೆ. ಮುಸ್ಲಿಮರಿಗೆ ಆದರ್ಶ ವ್ಯಕ್ತಿಗಳು ಪ್ರವಾದಿಗಳು, ನಂತರ ಬಂದ ನಾಲ್ಕು ಖಲೀಫಾ ನಾಯಕರುಗಳು, ಪಾಶ್ಚಿಮಾತ್ಯರು ಈಗಲೂ ಕೊಂಡಾಡುವ ಸುಲ್ತಾನ್ ಸಲಾಹುದ್ದೀನ್ ಅಯ್ಯೂಬಿಯಂಥ ಮಹಾ ವ್ಯಕ್ತಿಗಳು. ಇವರಾರೂ ಧರ್ಮ ಬೇರೆ ಎಂದು ಹೇಳಿ ಪರಧರ್ಮೀಯರನ್ನು ನಿಕೃಷ್ಟವಾಗಿ ನಡೆಸಿಕೊಂಡಿಲ್ಲ. ಚರಿತ್ರೆಯಲ್ಲಿ ತಮ್ಮ ಸ್ವಾರ್ಥ, ಅಧಿಕಾರ ಮತ್ತು ಸಾಮ್ರಾಜ್ಯ ವಿಸ್ತರಣೆಗೆ ಬಂದ ದಂಡು ಕೋರರೋ, ಲೂಟಿಕೋರರೋ ಮುಸ್ಲಿಮರಿಗೆ ಆದರ್ಶ ಅಲ್ಲ ಹಾಗೂ ಧರ್ಮ ಸಮ್ಮತವಲ್ಲದ ಕೆಲಸ ಮಾಡಿದ ರಾಜರ ಬಗ್ಗೆ ಮುಸ್ಲಿಮರಿಗೆ ಹೆಮ್ಮೆಯೂ ಇಲ್ಲ.

ಬರಹಾ, ನೂರು ನೂರು ತರಹಾ

ವಿರಹಾ, ನೂರು ನೂರು ತರಹಾ, ಹಾಗೆಯೇ ಬರಹಾ ನೂರು ನೂರು ತರಹಾ ಎನ್ನಬಹುದು. ಬರೆಯಲು ಪ್ರೇರಣೆ ಬೇಕಂತೆ. ಯಾವುದರ ಬಗ್ಗೆ ಬರೆಯುವುದು, ನಾನು ಬರೆದದ್ದು ಜನ ಓದುವರೋ, ನಗುವರೋ? ಈ ಪ್ರಶ್ನೆಗಳಿಗೆ ಉತ್ತರ ಕಂಡು ಕೊಳ್ಳಲು ಪ್ರಯತ್ನಿಸಿ ಇರುವ ಸಮಯ ಹಾಳು ಮಾಡಿಕೊಳ್ಳಬೇಡಿ. ನಗುವವರು ನಗಲಿ, ನೀವೇನೆ ಮಾಡಿದರೂ ನಗುವವರು ಇರುತ್ತಾರೆ, ಏಕೆಂದರೆ ತಾವು ಮಾಡಲಾಗದ ಅಥವಾ ಸೋಮಾರಿತನದಿಂದ ಮಾಡಲು ಇಷ್ಟವಿಲ್ಲದ ಜನ ಎಲ್ಲರೂ ತಮ್ಮಂತೆಯೇ ಇರಲಿ ಎಂದು ಆಶಿಸುತ್ತಾರೆ. ಅವರ ಈ ಬಯಕೆಗೆ ನೀವು ಬಲಿಯಾಗುವುದು ಬೇಡ. ಬರಹಕ್ಕೆ ಬೇಕಾದ ವಸ್ತು, ಪ್ರೇರಣೆ ಬಗ್ಗೆ ಬ್ಲಾಗೊಂದರಲ್ಲಿ ಬಂದದ್ದು ನೋಡಿ. ಇದನ್ನು ನಾವೂ ಅಳವಡಿಸಿಕೊಳ್ಳಬಹುದು.

ಯಾವುದಾದರೂ ಒಂದು ಚಿತ್ರವನ್ನು ಆರಿಸಿಕೊಳ್ಳುವುದು. ಅದರ ಬಗ್ಗೆ ಒಂದೆರಡು ವಾಕ್ಯಗಳ ವಿಶ್ಲೇಷಣೆ. ದಿನ ಪೂರ್ತಿ ಚಿತ್ರದ ಮುಂದೆ ಕೂತು ಆಲೋಚನೆ ಮಾಡುವುದಲ್ಲ. ೧೦ ಅಥವಾ ೧೫ ನಿಮಿಷಗಳಿಗೆ ಅಲಾರಂ ಇಟ್ಟು ಬರೆಯುವುದು, ಸಮಯ ಮುಗಿದು ಘಂಟೆ ಮೊಳಗಿದ ಕೂಡಲೇ ನಿಲ್ಲಿಸಬೇಕು ಬರವಣಿಗೆಯನ್ನು.

ಅಲಾರ್ಮ್ ನ ಉದ್ದೇಶ “writer’s block” (ಬರಹಗಾರನಿಗೆ ಎದುರಾಗುವ ತಡೆ) ಅನ್ನು ತಡೆಯುವುದು. ೧೦ ಅಥವಾ  ೧೫ ನಿಮಿಷಗಳ ಗಡುವನ್ನು ಇಟ್ಟುಕೊಂಡು ಬರೆದಾಗ ಏನನ್ನಾದರೂ ಗೀಚಲೇಬೇಕು, ಹೀಗೆ ಗೀಚಿ ದಾಗಲೇ ಮೂಡುವುದು ಬರಹ ಅಕ್ಷರಗಳ ರೂಪದಲ್ಲಿ.

ಚಹಾ ಅಥವಾ ಕಾಫಿಗೆ ಎಲ್ಲಾದರೂ ಹೋಗುತ್ತೀರಲ್ಲ. ಚಹಾ ಹೀರುತ್ತಾ ಅಲ್ಲಿ ಕುಳಿತ ಯಾರದರೊಬ್ಬರ ಬಗ್ಗೆ ಬರೆಯುವುದ. ಅವನ ರೂಪ, ಚಹಾ ಹೀರುವ ರೀತಿ (ನೂರೊಂದು ರೀತಿಯಲ್ಲಿ ಚಹಾ ಹೀರುವುದನ್ನು ಕಾಣಬಹುದು), ಅವನ ವೇಷ… ಹೀಗೆ.. ಅದೂ ಸಹ ಮೇಲೆ ಹೇಳಿದ ರೀತಿಯಲ್ಲಿ. ಅಲಾರ್ಮ್ ಘಂಟೆಯನ್ನು  ಹೊತ್ತು ಕೊಂಡು ಹೋಗುವ ಅವಶ್ಯಕತೆಯಿಲ್ಲ, ಎಲ್ಲಾ mobile ಗಳಲ್ಲೂ ಇರುವಂಥದ್ದೇ.

ರೈಲು ಅಥವಾ ಬಸ್ ನಿಲ್ದಾಣದಲ್ಲಿ ಕಾಣುವ ದೃಶ್ಯಗಳು, ಜಾಹೀರಾತುಗಳು ಇವನ್ನು ಬರೆದಿಟ್ಟು ಕೊಳ್ಳುವುದು. ಮನೆಗೆ ಬಂದು ನಿಮ್ಮದೇ ಶೈಲಿಯಲ್ಲಿ ಬರೆಯುವುದು.

ಹೀಗೆ ಸ್ವಾರಸ್ಯಕರವಾಗಿ ಮೋಜಿನ ರೀತಿಯಲ್ಲಿ ಬರೆದು ಬರಹದ ಬೆಗ್ಗೆ ಹೆಚ್ಚು ಆಸಕ್ತಿ ವಹಿಸಿಕೊಳ್ಳಬಹುದು.

ಅಮ್ಮಾ, ನಾನ್ಹೇಗೆ ಹುಟ್ಟಿದೆ?

ಮಕ್ಕಳ ಹತ್ತು ಹಲವು ಕುತೂಹಲಗಳಲ್ಲಿ ಒಂದು ಮಕ್ಕಳು ಹೇಗೆ ಹುಟ್ಟುತ್ತವೆ ಎಂದು.  ನಾನ್ಹೇಗೆ ಬಂಡೆ ಎನ್ನುವ ಈ ಮಕ್ಕಳ ಪ್ರಶ್ನೆ ನಮ್ಮನ್ನು ತಬ್ಬಿಬ್ಬು ಮಾಡುವುದು ಸಹಜವೇ. ಐದನೇ ಕ್ಲಾಸಿನಲ್ಲಿದ್ದಾಗ ನನ್ನ ಪೋಲಿ ಗೆಳೆಯನೊಬ್ಬ ವಿವರವಾಗಿ ತಿಳಿಸಿ ಹೇಳಿದರೂ ತಂದೆ ತಾಯಿ ಬಗೆಗಿನ ಅಪಾರವಾದ ಗೌರವ ಅವನ ಕಥೆಯನ್ನೂ ನಂಬದಂತೆ ತಡೆದಿತ್ತು. ನಾನು ಅಂದು ಕೊಂಡಿದ್ದು ಮಕ್ಕಳು ಬೇಕೆಂದಾಗ ತಂದೆ ತಾಯಿಗಳು ದೇವರಲ್ಲಿ ಕೇಳಿ ಕೊಳ್ಳುತ್ತಾರೆ ಮತ್ತು ಆ ಕರುಣಾಮಯನಾದ ದೇವರು ಮಕ್ಕಳನ್ನು ಕರುಣಿಸುತ್ತಾನೆ ಎಂದು, ಆದರೆ ಮೇಲೆ ಹೇಳಿದಂಥ ಪೋಲಿ ಪೋಕರಿಗಳು ವಕ್ಕರಿಸಿ ಹಾಗಲ್ಲ ಕಣೋ ಬೆಪ್ಪೆ ಹೀಗೆ ಎಂದು ಸವಿವರವಾಗಿ ಹೇಳಿದಾಗ ಅಪ್ಪ ಅಮ್ಮನ ನನ್ನು ಸಂಶಯ ದಿಂದ ನೋಡುವಂತಾಗುತ್ತಿತ್ತು.

ಈ ಚಿತ್ರ ನೋಡಿ. ಜರ್ಮನಿ ದೇಶದಲ್ಲಿ ಮಕ್ಕಳು ಹೇಗೆ ಬರುತ್ತಾರೆ ಎಂದು ಮಕ್ಕಳಿಗೆ ತಿಳಿ ಹೇಳಲು ಪುಸ್ತಿಕೆಗಳು. ಅದರಲ್ಲಿನ ಒಂದು ದೃಶ್ಯ ನೀವೀಗ ನೋಡುತ್ತಿರುವುದು.