ಯೆಡಿಯೂರಪ್ಪ ನವರು ಹೊರಹೋಗಬೇಕು ಎಂದು ಕೊನೆಗೂ ‘ಭಾಜಪ’ದ ಹೈ ಕಮಾಂಡ್ ಜಪಿಸಿತು. ಈ ಜಪಕ್ಕಾಗಿ ಕುಮಾರಪ್ಪ ಅಂಡ್ ಕಂಪೆನಿ ಚಾತಕ ಪಕ್ಷಿಯಂತೆ ಕಾದು ಕುಳಿತಿತ್ತು. ಹೊರನಡಿಯಿರಿ ಎನ್ನುವ ಆಜ್ಞೆ ಹೊರಬಿದ್ದಾಗ ಕಾಂಗ್ರೆಸ್ ನದು ಅಪಸ್ವರ, ಈ ಆಜ್ಞೆ ತುಂಬಾ ತಡವಾಗಿ ಬಂತು ಅಂತ. ಏನೇ ಇರಲಿ, ರಾಜಕಾರಣದಲ್ಲಿ ಇವೆಲ್ಲಾ ಇದ್ದಿದ್ದೆ, ಯಾರು ಅಧಿಕಾರದ ಸ್ಥಾನದಲ್ಲಿ ಕೂತಿರ್ತಾರೋ ಅವರ ಕಾಲನ್ನು ಎಳೆದು ಹಾಕಲು ಮತ್ತೊಂದು ಮಾಜಿ ಅಧಿಕಾರಸ್ಥರ ಗುಂಪು ಕಾಯುತ್ತಾ ಇರುತ್ತದೆ. ಸರಿ, ಈಗ ನಮ್ಮ ರಾಜ್ಯದ ಮುಂದಿನ ಮುಖ್ಯ ಮಂತ್ರಿಗಳು ಯಾರು ಅಂತ ಕವಡೆ ಹಾಕಿ ನೋಡಲು ಕವಡೆ ಹುಡುಕುವಾಗ ಮತ್ತೊಂದು ಶಾಕ್ ತಗುಲಿತು. ಯಾವ ಜಾತಿಯ ಮುಖ್ಯಮಂತ್ರಿ ಬೇಕು ಅಂತ. ಈ ಪ್ರಶ್ನೆ ಒಂದು ಬ್ಲಾಗ್ ಕೇಳ್ತು. ಥತ್ತೇರಿ, ಮತ್ತೊಂದು ಸಮಸ್ಯೆ ಈಗ. ಈ ಸಮಸ್ಯೆ ನಮ್ಮ ಮಧ್ಯೆ ಇಲ್ಲ ಅಂತ ಭಾವಿಸಿಕೊಂಡಿರುವಾಗಲೇ ಪಾಟೀ ಸವಾಲಿನಂತೆ ಬಂದು ಎರಗಿತು, ಯಾವ ಜಾತಿಯ ಮುಖ್ಯ ಮಂತ್ರಿ ಬೇಕು ಅಂತ. ಅಷ್ಟೆಲ್ಲಾ ರಾಜಕಾರಣ ನನಗೆ ತಿಳೀ ಒಲ್ದು, ಇಷ್ಟು ಮಾತ್ರ ಗೊತ್ತು, ನಮ್ಮ ಅಲ್ಫೋನ್ಸೋ ಜಾತಿಯ ಮಾವಿನ ಹಣ್ಣಿನಂಥ ಹಣ್ಣು ಎಲ್ಲೂ ಹುಟ್ಟಿಲ್ಲ. ಹುಟ್ಟೋದೂ ಇಲ್ಲ.
ಯಾವ ಜಾತಿಯ ವ್ಯಕ್ತಿಯ ಕೈಗೇ ಹೋಗಲಿ ಅಧಿಕಾರ ಜಾತಿ, ಮತ, ಧರ್ಮ, ಪಂಥ ಭೇಧ ಮರೆತು ನಮ್ಮ ರಾಜ್ಯದ ಅಭ್ಯುದಯವನ್ನು ಮಾತ್ರ ಗಮನದಲ್ಲಿಟ್ಟು ಕೊಂಡು ಸರಕಾರ ನಡೆಸಲಿ ಎನ್ನುವ ಸಣ್ಣ ಆಸೆ ದೂರದ ಮರಳುಗಾಡಿನಿಂದ.