ಬೇಡದ ಕಡೆ ತಲೆ ಹಾಕಿದ ಕರಡಿ

ನಮಗೆ ಅವಶ್ಯಕತೆ ಇರದ ಕಡೆ ತಲೆ ಹಾಕಬಾರದು ಎಂದು ಹಿರಿಯರ ಬುದ್ಧಿವಾದ. ಕಿತಾಪತಿ ಮಾಡುವವರನ್ನು ಕಂಡರೆ ಹೇಳುತ್ತಾರೆ ಬೇಡದೆ ಇರೋ ಜಾಗದಲ್ಲಿ ತಲೆ ಹಾಕೋದು ಅಂದ್ರೆ ಇವ್ನಿಗೆ ತುಂಬಾ ಇಷ್ಟ ಎಂದು ತೆಗಳೋದನ್ನೂ ನಾವು ಕೇಳಿದ್ದೇವೆ. ಆದರೆ ಇಲ್ಲಿ ಬೇಡ ಕಡೆ ತಲೆ ಹಾಕಿ ಮಂಗಳಾರತಿ ಮಾಡಿಸಿ ಕೊಂಡಿದ್ದು ಹುಲು ಮನುಜನಲ್ಲ. ಬದಲಿಗೆ ಮೈ ತುಂಬಾ ಕೇಶ ಇಟ್ಟುಕೊಂಡು ನಮ್ಮ ಮಕ್ಕಳಿಗೆ ಬೊಂಬೆ ರೂಪದಲ್ಲೂ, ನಿಜ ರೂದಲ್ಲೂ ಕಚಗುಳಿ ಇಡುವ ಜಾಂಬವ. ಕರಡಿ.

ಫ್ಲೋರಿಡಾ ರಾಜ್ಯದಲ್ಲಿರುವ “ಒಕಾಲಾ” ನಗರದಲ್ಲಿ ವಾಸಿಸುವ ಕರಡಿಯೊಂದು ತನ್ನ ತಲೆಯನ್ನು ಪ್ಲಾಸ್ಟಿಕ್ ಬಾಟಲಿ ಯೊಂದರಲ್ಲಿ ಸಿಕ್ಕಿಸಿಕೊಂಡು ಪರದಾಡಿತು. ಪೂರ್ತಿ ಹತ್ತು ದಿನ. ಓಹ್, ಹತ್ತು ದಿನಗಳ ಮನುಷ್ಯನ ನಿರ್ಲಕ್ಷ್ಯೆ ಕಾರಣ  ಕಾಲ ತಿನ್ನಲು, ಕುಡಿಯಲು ಆಗದೆ ಒದ್ದಾಡಿದ ಕರಡಿಗೆ ಕೊನೆಗೆ ಮುಕ್ತಿ ಸಿಕ್ಕಿದ್ದೂ ಭಾಗ್ಯಕ್ಕೆ ಮನುಷ್ಯನಿಂದಲೇ. ಪ್ರವಾಸದ ವೇಳೆ ಹೋದ ಹೋದೆಡೆ ನಮ್ಮ ಗಾರ್ಬೇಜ್ ಎಳೆ ದು ಕೊಂಡು ಹೋಗುವ ನಮಗೆ ನಿಸರ್ಗದ ಕಡೆ ನಮಗಿರುವ ಬೇಜವಾಬ್ದಾರಿತನಕ್ಕೆ ಪ್ರವಾಸ ಅಥವಾ ಪರ್ಯಟನ ಕಳೆದು ಬರುವಾಗ ನಮ್ಮ ಹಿಂದೆ ಬಿಟ್ಟು ಹೋಗುವ ತಿಪ್ಪೆಗಳೇ ಸಾಕ್ಷಿ.

ಜೆಡ್ಡಾ ದಿಂದ ಸುಮಾರು ೨೦೦ ಕಿ.ಮೀ ಇರುವ ನಮ್ಮ ಕೆಮ್ಮಣ್ಣು ಗುಂಡಿಯನ್ನು ಹೋಲುವ “ತಾಯಿಫ್” ಭೇಟಿಯ ವೇಳೆ ಬೆಟ್ಟದ ಕೆಳಗಿನ ದಾರಿಯಲ್ಲಿ ಒಂದು ಮರವನ್ನು ಕಂಡೆ. ಸಾಮಾನ್ಯವಾಗಿ ಮರ ಎಂದ ಮೇಲೆ ಎಲೆಗಳು ಇದ್ದೇ ಇರುತ್ತವೆ, ಅಲ್ಲವೇ? ಸಖೇದಾಶ್ಚರ್ಯ, ಇದೊಂದು ವಿಚಿತ್ರ ಮರವಾಗಿ ಕಂಡಿತು ನನಗೆ. ಮರದ ಟೊಂಗೆಯ ತುಂಬಾ ಬಣ್ಣ ಬಣ್ಣದ, ವಿವಿಧ ಆಕಾರದ, ಗಾತ್ರದ ಚೀಲಗಳು. ಪ್ಲಾಸ್ಟಿಕ್ ಚೀಲಗಳು. ಸಂಪೂರ್ಣ ಮರವನ್ನು ಆವರಿಸಿ ಬಿಟ್ಟಿತ್ತು. ಗಾಡಿಯಲ್ಲಿ ಹೋಗುವಾಗ ಮೇಯೋದು, ತದನಂತರ ಬಿಡೋದು ಗಾಳಿ ಪಟವ. ಅಲ್ಲಲ್ಲ, ಪ್ಲಾಸ್ಟಿಕ್ ಪಟವ. ಸ್ವಲ್ಪ ದೂರ ಹೋದ ನಂತರವೇ ನನ್ನ ಮಂದ ಮಾತಿಗೆ ತೋಚಿದ್ದು ಒಹ್, ಈ ಮರದ ಚಿತ್ರವೊಂದನ್ನು ಕ್ಲಿಕ್ಕಿಸಬೇಕಿತ್ತು ಎಂದು.       

ತನ್ನ ಸುಂದರ ಮೂತಿಯನ್ನು ಈ ಪ್ಲಾಸ್ಟಿಕ್ ಬಾಟಲಿಗೆ ಸಿಕ್ಕಿಸಿಕೊಂಡ ಕೇವಲ ಆರು ತಿಂಗಳ ಹಸುಳೆ ಕರಡಿಗೆ ವನ್ಯ ಜೀವಿ ಸಂರಕ್ಷಕರು ಬಂದು ಮೊದಲು ಪಕ್ಕದಲ್ಲೇ ಇದ್ದ ಅದರ ತಾಯಿಗೆ ಶಾಂತ ಗೊಳಿಸುವ ಚಚ್ಚು ಮದ್ದನ್ನು ನೀಡಿ ಪ್ಲಾಸ್ಟಿಕ್ ಮುಕ್ತ ಗೊಳಿಸಿದರು. ಅವರ ಪ್ರಕಾರ ಆ ಕರಡಿ ಒಂದೆರಡು ದಿನಗಳಲ್ಲಿ ಸಾಯುತ್ತಿತ್ತಂತೆ ಬಾಟಲಿ ಕಾರಣ  ತಿನ್ನಲು ಕುಡಿಯಲು ಆಗದೆ.     

ಚಿತ್ರ ಕೃಪೆ: http://www.newstimes.com/news/article/Plastic-jar-removed-from-Fla-bear-cub-s-head-615774.php#photo-3

ಹೀಗೊಂದು ಸಂಭಾಷಣೆ

ಫೋನಿನಲ್ಲಿ ಸಂಭಾಷಣಾ ನಿರತ ಜನ ತಮ್ಮ ಸುತ್ತ ಮುತ್ತ ಇತರೆ ಜನರಿರುತ್ತಾರೆ, ತಮ್ಮನ್ನು ಗಮನಿಸುತ್ತಿರುತ್ತಾರೆ, ನಮ್ಮ ಮಾತುಗಳನ್ನು ಕೇಳುತ್ತಿರುತ್ತಾರೆ ಎನ್ನುವ ಯಾವುದೇ ಪರಿವೆಯಿಲ್ಲದೆ ಸ್ವರ ಏರಿಸಿ ಬಡ ಬಡಿಸುತ್ತಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಸೌಜನ್ಯಗಳ ಬಗ್ಗೆ ಜನರಿಗೆ ಅರಿವನ್ನು ಹೇಗೆ ಮೂಡಿಸ ಬಹುದೋ ಗೊತ್ತಿಲ್ಲ. ಮೊನ್ನೆ ಒಂದು ಚೆಕ್ಕಿನ ಬಗ್ಗೆ ವಿಚಾರಿಸಲು ಸೌದಿ ಅಮೇರಿಕನ್ ಬ್ಯಾಂಕ್ ಗೆ ಹೋದೆ. ಚೆಕ್ vip ವಿಭಾಗಕ್ಕೆ ಸೇರಿದ್ದರಿಂದ ವಿಶಾಲವಾದ, ಸುಸಜ್ಜಿತ vip lounge ನಲ್ಲಿ ಆಸೀನನಾದೆ. ನನ್ನ ಪಕ್ಕದಲ್ಲಿ ಸುಮಾರು ನಲವತ್ತು ನಲವತ್ತೈದರ ಸೌದಿ ಯೊಬ್ಬ ಬರ್ಮುಡಾ ಚಡ್ಡಿ, ಬೇಸ್ ಬಾಲ್ ಟೋಪಿ ಧರಿಸಿ ಫೋನಿನಲ್ಲಿ ಹರಟುತ್ತಿದ್ದ. ಆತನ ಮಾತಿನಿಂದ ತಿಳಿಯಿತು ಅವನೊಬ್ಬ ಅತ್ಯಾಧುನಿಕ, ಸ್ಪೋರ್ಟ್ಸ್ ಮಾಡೆಲ್ ಕಾರುಗಳ ಡೀಲರ್, ಮತ್ತು ಆತನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದವನು ಅಮೆರಿಕೆಯವನು ಎಂದು. ಸೌದಿ ಅವನಿಗೆ ಹೇಳಿದ ಹೌದು ನೀನು ಕೇಳುತ್ತಿರುವ ಕಾರು ನನ್ನ ಹತ್ತಿರ ಇದೆ, ನಾನು ನಾಳೆ ರಿಯಾಧ್ ಗೆ ಬರುತ್ತಿದ್ದೇನೆ, ಬರುವುದು ವಿಮಾನದಲ್ಲಲ್ಲ ನನ್ನ porsche ಕಾರಿನಲ್ಲಿ, ನನಗೆ ಸುಮಾರು ೧೦ ಘಂಟೆಗಳ ಸಮಯ ಹಿಡಿಯಬಹುದು ಎಂದು ಹೇಳುತ್ತಿದ್ದ. ಜೆಡ್ಡಾ ದಿಂದ ರಿಯಾಧ್ ಸುಮಾರು ೧೪೦೦ ಕಿ.ಮಿ. porsche (ಪೋರ್ಷೆ) ಅತಿ ವೇಗವಾಗಿ ಸರಾಗವಾಗಿ ಚಲಿಸಬಲ್ಲ ಕಾರು. ಈ ಸೌದಿ ೧೦ ಘಂಟೆಗಳು ಸಾಕು ರಿಯಾದ್ ತಲುಪಲು ಸಾಕು ಎಂದಾಗ ಅಮೆರಿಕೆಯವ ಹೇಳಿದ ನಿಧಾನವಾಗಿ ಓಡಿಸು ಕಾರನ್ನು, express way ರಸ್ತೆಯಲ್ಲಿ ಅಪಘಾತ ಹೆಚ್ಚು ಎಂದು ಎಚ್ಚರಿಸಿದ. ಅದಕ್ಕೆ ಸೌದಿ ಹೇಳಿದ, ಹೇಯ್ ನೀನೇನು ಭಯ ಪಡಬೇಡ. ನಾನು ಸಣಕಲು ವ್ಯಕ್ತಿ, ಅಪಘಾತವಾದರೂ ಎಲ್ಲಾದರೂ ಮರುಭೂಮಿಯಲ್ಲಿ ಹಾರಿ ಬಿದ್ದಿರುತ್ತೇನೆ, ಆದರೆ ದೊಡ್ಡ ಹೊಟ್ಟೆಯ ಸ್ಥೂಲಕಾಯದವರಾದರೆ ಚಿಂದಿ ಚಿಂದಿ ಆಗುತ್ತಾರೆ (they will go smithereens) ಅಪಘಾತವಾದಾಗ ಎಂದು ಹೇಳುತ್ತಿದ್ದ. ನಮ್ಮ ಮುಂದಿನ ಸೋಫಾದಲ್ಲಿ ಸೂಟು ಬೂಟು ತೊಟ್ಟ ಲೆಬನಾನ್ ದೇಶದವನ ಥರ ಕಾಣುತ್ತಿದ್ದ ಸ್ಥೂಲ ಕಾಯದ ವ್ಯಕ್ತಿಯೊಬ್ಬ ಕುಳಿತಿದ್ದ. ಈಗಾಗಲೇ ಈ ಜೋರಾದ ಸಂಭಾಷಣೆಯಿಂದ ಬೇಸತ್ತಿದ್ದ ಆ ವ್ಯಕ್ತಿ ಈ ಸ್ಥೂಲ ಕಾಯದವರ ಬಗ್ಗೆ ಸೌದಿ ಆಡಿದ ಮಾತಿನಿಂದ ಕುಳಿತಲ್ಲಿಂದಲೇ ಮಿಸುಕಾಡುತ್ತಿದ್ದ. ಹೀಗೆ ಹೇಳಿದ ವ್ಯಕ್ತಿ ಸೌದಿ ಅಲ್ಲದಿದ್ದರೆ ಸರಿಯಾದ ಉತ್ತರ ಕೊಡುತ್ತಿದ್ದನೇನೋ ಪಾಪ ಆ ಡುಮ್ಮ, ಆದರೆ ಈ ಮಾತುಗಳನ್ನ ಕೇಳಿ ಅವನಿಗೆ ಅಲ್ಲಿ ಕೂತಿರಲು ಆಗದೆ ನಿಧಾನವಾಗಿ ತನ್ನ ಶರೀರವನ್ನು ಸೋಫಾದಿಂದ ಆರೋಹಣ ಮಾಡಿ ಕಾಲ್ತೆಗೆದ. ಈ ಸನ್ನಿವೇಶ ನೋಡಿ ನನಗೆ ನಗು ತಡೆಯಲಾಗಲಿಲ್ಲ. ಇಲ್ಲಿಗೆ ನಿಲ್ಲಲಿಲ್ಲ ಪುಕ್ಕಟೆ ಮನರಂಜನೆ, ಸೌದಿಯ ಮಾತು ಇನ್ನೂ ಮುಂದುವರೆದಿತ್ತು. ಅಮೆರಿಕೆಯವ ಹೇಳಿದ ನಾನು feeling lonely in riyadh ಎಂದು, ಅದಕ್ಕೆ ಥಟ್ಟನೆ ಈ ಸೌದಿ ಅವನಿಗೆ ಹೇಳಿದ your lonliness and my kindness might prompt you to do something (ನಿನ್ನ ಒಂಟಿತನ ಮತ್ತು ನನ್ನ ಒಳ್ಳೆಯತನ “ಬೇಡದ್ದನ್ನು” ಮಾಡಲು ನಿನ್ನನ್ನು ಪ್ರೇರೇಪಿಸಬಹುದು) ಹ ಹ ಹಾ ಎಂದು ನಕ್ಕ.

ಸೂರಿನ ಕೂಗು

ಕೆಲಸ ನಡೆಯದೇ ಇದ್ದಾಗ, ತಾನು ಬಯಸಿದ್ದು ಸಿಗದೇ ಇದ್ದಾಗ “ಅತ್ತು ಕರೆದು ಮೈಯ್ಯನ್ನೆಲ್ಲಾ ಪರಚಿಕೊಳ್ಳುವುದು” ಮಗು. ಕೆಲವರು ಕೈಗೆ ಸಿಕ್ಕಿದ್ದನ್ನು ಗೋಡೆಗೆ ಅಪ್ಪಳಿಸಿ ತಮ್ಮ ಕೋಪವನ್ನು  ವ್ಯಕ್ತಪಡಿಸು ತ್ತಾರೆ. ಇನ್ನೂ ಕೆಲವರು ಶತಪಥ ಹಾಕುತ್ತಾ ತಮ್ಮ ಕೋಪವನ್ನು ನೆಲದ ಮೇಲೆ, ಪಾಪಿ ಶರೀರ ಹೊತ್ತ ಪಾದಗಳ ಮೇಲೆ ತೋರಿಸುತ್ತಾರೆ, ಇಲ್ಲಾ ಕೈಗೆ ಸಿಗುವ ಮಕ್ಕಳ ಕಿವಿ ಹಿಂಡಿ, ಅವರ ಬಾಯಿಂದ ಸಪ್ತ ಸ್ವರ ಹೊರಡಿಸಿ ಕೋಪ ತೀರಿಸಿಕೊಳ್ಳುತ್ತೇವೆ. ಕೋಪ ಎನ್ನುವುದೇ ಹೀಗೆ. ವ್ಯಕ್ತಪಡಿಸಲೇ ಬೇಕು. ಇಲ್ಲದಿದ್ದರೆ ಹಿಡಿದಿಟ್ಟುಕೊಂಡ ಕೋಪ depression ಆಗಿಯೋ ಮತ್ತೇನಾದರೂ ಆಗಿಯೋ ಪರಿಣಮಿಸುತ್ತದೆ. pent up anger ಒಳ್ಳೆಯದಲ್ಲ.  ವೈಯಕ್ತಿಕ ಜೀವನದಲ್ಲಿ ಹೀಗಾದರೆ ಪ್ರಜಾಪ್ರಭುತ್ವದಲ್ಲಿ ಈ ಕೋಪ, ನಿರಾಶೆ, ಹತಾಶೆಯನ್ನು ವ್ಯಕ್ತಪಡಿಸಲು ಹಲವು ಮಾರ್ಗಗಳು. ನಾಯಕನ ಅಥವಾ ವಿರೋಧಿಯ ಪ್ರತಿಕೃತಿ ಸುಟ್ಟೋ, ಘೋಷಣೆ ಕೂಗಿಯೋ (ಕಾಂಗ್ರೆಸ್ ಪಕ್ಷ ಎತ್ತು ಭಿಕ್ಷ, ೧೯೭೭ ರಲ್ಲಿ ಜನತಾ ಪಕ್ಷದವರು ಹೇಳುತ್ತಿದ್ದುದು, ಈಗ ಇದು ಹಳೆ ಫ್ಯಾಶನ್), ಕಪ್ಪು ಬಾವುಟ ಮೂತಿಗೆ ಹಿಡಿದೋ, ರಸ್ತೆ ತಡೆ ನಡೆಸಿಯೋ ಪ್ರಕಟ. ಮೇಲೆ ಹೇಳಿದವು run of the mill ಅಂತಾರಲ್ಲ ಹಾಗೆ. ಕೇಳಿ, ನೋಡಿ ಸಾಕಾಗಿ ಹೋದ ನಮೂನೆಗಳು. ಎಲ್ಲಿ ಹೋದರೂ, ಯಾವ ಸಂದರ್ಭಗಳಲ್ಲೂ ಎಲ್ಲಾ ಹೆಣ್ಣು ಮಕ್ಕಳ ಮೈ ಮೇಲೂ ನಡೆದಾಡುವ “ಮಾಕ್ಸಿ” ಗಳ  ಹಾಗೆ. ಸರ್ವಾಂತರ್ಯಾಮಿ. ಇತ್ತೀಚೆಗೆ ಈ ಏಕತಾನತೆಗೆ, monotonous ಗೆ, ಬಿಡುವು ಸಿಕ್ಕಿತು. ನಮ್ಮಲ್ಲೂ ಇದೆ ಕ್ರಿಯಾಶೀಲತೆ ಎಂದು ತೋರಿಸಿದೆವು. ಪ್ರೇಮಿಗಳ ದಿನದಂದು ಈ ಆಚರಣೆ ಸಲ್ಲದು ಎಂದು ಪ್ರೇಮಿಗಳಿಗೆ ಎಚ್ಚರಿಸಿದವರ ಅಂಡುಗಳಿಗೆ ಕೆಂಪು ಕೆಂಪಾದ ಚಡ್ಡಿಗಳ ವಿತರಣೆ. ಜಯಲಲಿತಾಳ ಸೀರೆ ವಿತರಣೆ ಥರ, ಐಶ್ವರ್ಯಾ ರೈ ವಿವಾಹದ ಲಡ್ಡುಗಳ ಥರ ಅತ್ಯುತ್ಸಾಹದ ಚಡ್ಡಿ ವಿತರಣೆ. ಪ್ರತಿಭಟಿಸಲು ನಾವು ಕಂಡುಕೊಂಡ ಈ ವಿನೂತನ ವಿಧಾನ ನಮ್ಮ ದೇಶದಲ್ಲಿ ಮಾತ್ರವಲ್ಲ, ಹೊರ ದೇಶಗಳಲ್ಲೂ ಜನಪ್ರಿಯವಾಗಿ ಅಮೆರಿಕೆಯ ಪ್ರಸಿದ್ಧ NPR ರೇಡಿಯೋ ಸಹ ಬಿತ್ತರಿಸಿತು. ಈಗಾಗಲೇ ಚಡ್ಡಿಗಳು ಸವೆದೋ, ಹರಿದೋ ಹೋದರೂ ಈ ಪ್ರತಿಭಟನೆಯ “ರೂವಾರಿಣಿ” ಮಾತ್ರ ಅಜರಾಮರಳಾದಳು. ಕ್ರಿಯಾಶೀಲತೆಗೆ “ಚಡ್ಡಿ ಸಾಕ್ಷಿ” ಯಾದಳು.   

ಬಹಳ ಸಂಭಾವಿತರಾದ, ಸುಸಂಸ್ಕೃತರಾದ ನಾವು ಜನ ಚಡ್ಡಿ ಹಾಕಿಕೊಳ್ಳಲಿ ಎಂದು ಸರಬರಾಜು ಮಾಡಿದರೆ ಮತ್ತೊಂದೆಡೆ ಪ್ಯಾಂಟ್ ಬಿಚ್ಚಿ ಪ್ರತಿಭಟನೆ. ಆಂ, ಏನ್ರೀ ಇದು ಉದ್ಧಟತನ ಎಂದಿರಾ? ಯಾರಿಗ್ರೀ ಉದ್ಧಟತನ?  ಉದ್ಧತನ ನಮಗೆ. ನಗ್ನತೆಯೇ ನೈಜತೆ ಎಂದು ನಂಬುವ, ನಂಬಿದಂತೆ ನಡೆಯುವ ಪಾಶ್ಚಾತ್ಯರಿಗೆ ಏನ್ರೀ ಉದ್ಧಟತನ? ಮೇಲೆ ಹೇಳಿದ ಪ್ಯಾಂಟ್ ಅವರೋಹಣ ಮಾಡಿ ಪ್ರತಿಭಟನೆ ನಡೆದಿದ್ದು ಇಟಲಿಯ ರೋಮ್ ನಗರದಲ್ಲಿ. ಇಟಲಿ ಎಂದ ಕೂಡಲೇ ಕಿವಿ ನಿಮಿರುತ್ತವೆ ನಮ್ಮದು, ಎಷ್ಟಿದ್ದರೂ ನಮ್ಮ ಬೀಗರಲ್ಲವೇ ಅವರು?  ರೋಮ್ ನಗರದ ಮೇಯರ್ ಹೊಸ ತೆರಿಗೆ ಒಳಗೊಂಡಿದ್ದ ಆಯ-ವ್ಯಯ ಪತ್ರ ಮಂಡಿಸಲು ತಯಾರಿಲ್ಲ. ಚುನಾವಣೆ ಹತ್ರ ಬಂತು ಎಂದು ಆಯ-ವ್ಯಯ ಪತ್ರ ಅಡಿಗಿಟ್ಟು ಕೂತು ಬಿಟ್ಟ ಪರಮ ಪೂಜ್ಯ ಮೇಯರ್. ಇದನ್ನು ತೆಗೆಸಲು ಮಾಡಿದ ಎಲ್ಲಾ ಪ್ರಯತ್ನವೂ ವಿಫಲವಾದ ಮೇಲೆ ಈ ಅವರೋಹಣ ಕಾರ್ಯಕ್ರಮ. ಇದರ ಉದ್ಘಾಟನೆ ಯಾರು ಮಾಡಿದರೋ ಗೊತ್ತಿಲ್ಲ, ಅವರೋಹಣ ಸಾಂಗವಾಗಿ ಜರುಗಿತು. ಜನರ ಅವಸ್ಥೆ ಕಂಡು ಬಂಡೆ ಕರಗಿದರೂ ಮೇಯರ್ ನ ಹೃದಯ ಕರಗದೆ ಆಯ ವ್ಯಯ ಪತ್ರ ಬಚ್ಚಲು ಸೇರಿಕೊಂಡಿತು.

ಅಮೆರಿಕೆಯ ಆಪ್ತ ಮಿತ್ರ, ತಾನು ಪಶ್ಚಿಮ ಎಂದರೆ ಪೂರ್ವ ಎನ್ನುವ ಇರಾನ್ ದೇಶದಲ್ಲಿ ಅಧ್ಯಕ್ಷೀಯ ಚುನಾವಣೆ. ಹಾಲಿ ಅಧ್ಯಕ್ಷ “ಅಹ್ಮದಿ ನಿಜಾದ್” ಸೋತರೂ ಸೋಲೊಪ್ಪದೆ ಅಮೆರಿಕೆಯ ಅಧ್ಯಕ್ಷೀಯ ಚುನಾವಣೆಯಲ್ಲಿ ಬುಶ್ ಸಾಹೇಬರು ಪ್ರತಿಸ್ಪರ್ದಿ “ಅಲ್ ಗೋರ್” ಗೆ ಹಾಕಿದ ಟೋಪಿಯನ್ನೇ ತಮ್ಮ ಎದುರಾಳಿಗೆ ತೊಡಿಸಿ recycling ನ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ಜಗಕ್ಕೆ, ವಿಶೇಷವಾಗಿ ಪಾಶ್ಚಾತ್ಯರಿಗೆ (recycling ಪಾಶ್ಚಾತ್ಯರ ಕೂಸು) ಪಾಠ ಹೇಳಿಕೊಟ್ಟರು. ಈ ವಿಷಯದಲ್ಲಿ ಅಹ್ಮದಿ ನಿಜಾದ್ ಬುಶ್ ಅಭಿಮಾನಿ. ಪ್ರಪಂಚದ ಯಾವುದೇ ದಿಕ್ಕುಗಳಲ್ಲಿ ಹರಡಿ ಹೋದರೂ ತಮ್ಮ ಗುಣ ವೈಶಿಷ್ಟ್ಯಗಳ ಜನರನ್ನು ಕಂಡುಕೊಳ್ಳುತ್ತಾರೆ ಖದೀಮರು. ವಿರೋಧ ಪಕ್ಷದ ಅಭ್ಯರ್ಥಿ ಬಿಡುತ್ತಾನೆಯೇ, ಅದೂ  ಉರಿಯುವ ಬೆಂಕಿಗೆ ಅಮೇರಿಕಾ ಗಾಳಿ ಹಾಕಲು ತಯಾರಾಗಿರುವಾಗ? ವಿದ್ಯಾರ್ಥಿಗಳು ಬೀದಿಗೆ ಬಂದರು. ನಮ್ಮ ನೆರೆಯ ಮಿತ್ರ ೧೯೮೯ ರಲ್ಲಿ “ತಿಯಾನನ್ಮೆನ್ ಚೌಕ” ದ ಬಳಿ ಸೇನೆಯ ಟ್ಯಾಂಕರು ಗಳನ್ನು ಕಳಿಸಿ ರಸ್ತೆಯನ್ನು ಕೆಂಬಣ್ಣಕ್ಕೆ (ಪ್ರದರ್ಶನಕಾರರ ರಕ್ತದಿಂದ) ತಿರುಗಿಸಿದ ಹಾಗೆ ಮಾಡಲಿಲ್ಲ ಪ್ರೊಫೆಸರ್ ಅಹ್ಮದಿ ನಿಜಾದ್. ಡ್ರಿಲ್ ಮಾಸ್ತರ್ ನಂತೆ ಒಂದಿಷ್ಟು ಲಾಠಿ, ಮತ್ತೊಂದಿಷ್ಟು ಬೆದರಿಕೆ ಹಾಕಿ ಒಳಕ್ಕೆ ಕಳಿಸಿದರು ಪ್ರದರ್ಶನಕಾರರನ್ನು. ಈಗ “ಪೆಂಟ್ ಅಪ್” ಕೋಪವನ್ನೇನು ಮಾಡೋದು? ನೆಲೆ ಕಾಣದ ಕೋಪ ಸೂರು ಹತ್ತಿತು. ಜನ ತಮ್ಮ ಮನೆಗಳ ಸೂರಿನ ಮೇಲೆ ನಿಂತು ಅರಚಿದರು ಘೋಷಣೆಗಳನ್ನು. ದಿನವೂ ನಿರ್ದಿಷ್ಟ ಸಮಯಕ್ಕೆ ಕಿರುಚುವುದು. ಪಾಪ ಇವರಿಗೆ ಗೊತ್ತಿಲ್ಲ ರಾಜಕಾರಣಿಗಳು ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಮೊದಲನೆಯದಾಗಿ ಕಳೆದುಕೊಳ್ಳುವುದು ಕಿವಿಗಳನ್ನು ಎಂದು. ಎರಡನೆಯದಾಗಿ ಕಳಕೊಳ್ಳೋದು ಮಾನವನ್ನು. ಟೆಹರಾನಿನಲ್ಲೂ, ಇರಾನಿನ ಇತರೆ ನಗರಗಳಲ್ಲೂ ನಡೆದ ಗದ್ದಲ ಬೇರೆಲ್ಲ ದೇಶಗಳ ನಿದ್ದೆಗೆಡಿಸಿ ಗಡದ್ದಾಗಿ ಮಲಗಿದ್ದ ಶ್ವೇತ ಭವನವನ್ನು ಎಚ್ಚರಿಸಿತು. ಎಂದಿನಂತೆ ಕಟುವಾದ ಶಬ್ದಗಳು ಉರುಳಲಿಲ್ಲ ತಡಬಡಿಸಿ ಎದ್ದ ಶ್ವೇತ ಭವನದ ಹಸಿರು ಹುಲ್ಲು ಹಾಸಿನಿಂದ. ಏಕೆಂದರೆ ಇದು ಬುಶ್ ಶ್ವೇತ ಭವನವಲ್ಲ, ಒಬಾಮ ಭವನ. ಸ್ವಲ್ಪ ನಯವಾಗಿಯೇ ಗದರಿಸಿತು ಅಮೇರಿಕಾ. ನೋಡಪ್ಪಾ ಹೀಗೆಲ್ಲ ಮಾಡಬಾರದು, ಸರಿಯಾಗಿ ಮತಗಳನ್ನೂ ಎಣಿಸು, ಎಣಿಸಲು ಬರದಿದ್ದರೆ ಬೇಕಾದರೆ ನಮ್ಮ ಜನಗಳನ್ನು ಕಳಿಸುತ್ತೇವೆ ಎಂದು. ವಿಶ್ವವಿದ್ಯಾಲಯದಲ್ಲಿ ಪ್ರಾದ್ಯಾಪಕರೂ ಆದ ಇರಾನಿನ ಅಧ್ಯಕ್ಷರು ಅಮೆರಿಕೆಗೆ ತಮ್ಮದೇ ಭಾಷೆಯಲ್ಲಿ mind your business ಎಂದು ಹೇಳಿ ಅಮೆರಿಕೆಯ ಪ್ರತಿಭಟನೆಗೂ, ವಿದೇಶೀ ಸರಕಾರಗಳ ಮೂದಲಿಕೆಗೂ, ಮಾಧ್ಯಮಗಳ ತಿವಿತಗಳಿಗೂ ಅಸಾಧಾರಣವಾದ ಕಿವುಡುತನ ಪ್ರದರ್ಶಿಸಿದರು. ತಾವು ತಮಗರಿವಿಲ್ಲದೆಯೇ ಮಹಾತ್ಮ ಬುಶ್ ರ ಅಭಿಮಾನಿ ಎಂದು ತೋರಿಸಿಕೊಟ್ಟರು ಪ್ರಪಂಚಕ್ಕೆ.

ಥಾಯ್ಲೆಂಡಿನಲ್ಲಿ ಪದಚ್ಯುತ ಪ್ರಧಾನಿ “ಥಕ್ಸಿನ್ ಶಿನಾವತ್ರ” ರನ್ನು ಮರಳಿ ಅಧಿಕಾರಕ್ಕೆ ತರಬೇಕೆಂದು ಪಟ್ಟು ಹಿಡಿದು  ಜನ ಬೀದಿಗಿಳಿದರು ಕೆಂಪು ಅಂಗಿ ಧರಿಸಿ. ನಗರವೆಲ್ಲಾ ಕೆಂಪೋ ಕೆಂಪು. ಪ್ರತಿಭಟನೆಯ ವ್ಯಾಲೆಂಟೈನ್. ಜಪ್ಪಯ್ಯ ಎನ್ನಲಿಲ್ಲ ಸೇನಾ ಬೆಂಬಲಿತ “ಅಭಿಸಿತ್ ವೆಜ್ಜಜೀವ”. ೪೫ ರ, ಆಕ್ಸ್ಫೋರ್ಡ್ ನಲ್ಲಿ ಕಲಿತ ಸ್ಫುರದ್ರೂಪಿ ರಾಜಕಾರಣಿ ಥಾಯಿಲೆಂಡ್ ಅನ್ನು ವಿದೇಶೀ ಬಂಡವಾಳ ಹೂಡಿಕೆದಾರರಿಗೆ ಆಕರ್ಷಕವನ್ನಾಗಿ ಮಾಡಿದ್ದರು. ಆದರೆ ಶಿನಾವತ್ರ ಬೆಂಬಲಿಗರಿಗೆ ಈ ಬದಲಾವಣೆಯಾಗಲಿ, ಪ್ರಗತಿಯಾಗಲಿ ಬೇಕಿಲ್ಲ. ತರಬೇಕು ಮರಳಿ ತಮ್ಮ ನಾಯಕನನ್ನು ಗದ್ದುಗೆಗೆ. ಕೊನೆಗೆ ಎಲ್ಲರೂ ತಮ್ಮ ತಮ್ಮ ರಕ್ತ ಶೇಖರಿಸಿಕೊಂಡು ಬಕೇಟು ಗಳಲ್ಲಿ ತುಂಬಿ ಅಭಿಸಿತ್ ನಿವಾಸದ ಮುಂದೆ ಸುರಿದರು. ಅಭಿಸಿತ್ ಅವರ ಜಗುಲಿ ನೆತ್ತರುಮಯವಾಯಿತು, ಕ್ಷಣಗಳಲ್ಲಿ ರಕ್ತ ಹೆಪ್ಪುಗಟ್ಟಿತು. ಅದರೊಂದಿಗೆ ಅಭಿಸಿತ್ ನ ಅಧಿಕಾರದ ಮೋಹವೂ ಇನ್ನಷ್ಟು ಹೆಪ್ಪುಗಟ್ಟಿತು.         

ಹೀಗೆ ಪ್ರತಿಭಟನೆಗಳು ಒಂದಲ್ಲ ಒಂದು ತಮ್ಮದೇ ಆದ ರೀತಿಯಲ್ಲಿ ಪ್ರತ್ಯಕ್ಷಗೊಂಡು, ಸೋತ, ನೀರಸ ವಿಶ್ವಕ್ಕೆ ಗೆಲುವನ್ನೂ, ಲವಲವಿಕೆಯನ್ನು ತಂದು ಕೊಡುತ್ತವೆ. ನಿಮ್ಮದೂ ಏನಾದರೂ ವಿಶಿಷ್ಟ ವಿಧಾನಗಳಿದ್ದರೆ ಹೇಳಿ. ನಿಮಗಾಗದ ಸಹೋದ್ಯೋಗಿ ಸಮೀಪ ಇಲ್ಲದಾಗ ಅವನ ಹೆಸರಿನಲ್ಲಿ (ಆತ ತೆರೆದಿಟ್ಟು ಹೋದ office outlook ಮೂಲಕ) ಬೇಡದ ಮೇಲ್ ಕಳಿಸಿ ಆತನ ಬಾಳನ್ನು ಬಂಗಾರ ಮಾಡಿದ ನಿದರ್ಶನಗಳಿದ್ದರೆ ಹಂಚಿಕೊಳ್ಳಿ.

ಅಮೇರಿಕೆಗೆ ತಿಗಣೆ ಕಡಿತ

ಅಮೆರಿಕೆಗೀಗ ತಿಗಣೆ ಕಾಟ ಅಂತೆ. ಅಮೆರಿಕವೇ ಒಂದು ಮಹಾ ತಿಗಣೆ ಎಂದು ಅದನ್ನು ನಿಗ್ರಹಿಸಲು ನಾವು ಯೋಚಿಸುತಿದ್ದರೆ ಬಂತು ಹೊಸ ಪ್ರಾರಬ್ದ.  ಕಳೆದ ೫ ವರ್ಷಗಳಲ್ಲಿ ಶೇಕಡಾ ೭೧ ರಷ್ಟು ವೃದ್ಧಿ ಆಗಿದೆ ಅಂತೆ ಅಮೇರಿಕೆಯಲ್ಲಿ. ಎಲ್ಲಿಂದ ಬಂದವು ಎಂದು ಕೇಳಬೇಡಿ, ಬಹುಶಃ ಅಮೆರಿಕೆಯ ಮಿತ್ರ ಲಾಡೆನ್ ಮಹಾಶಯ ಆಫ್ಘಾನಿಸ್ತಾನದ “ತೋರಬೋರ” ಗವಿಗಳಿಂದ ಕಳಿಸಿರಲಿಕ್ಕೂ ಸಾಕು. you cannot laugh it off, anything can happen in this world, you see?

 ಇದರ ಹಾವಳಿ ತಡೆಯಲು ” ರಾಷ್ಟ್ರೀಯ ತಿಗಣೆ ಶೃಂಗ ಸಭೆ” ಅಮೇರಿಕೆಯಲ್ಲಿ. ತಿಗಣೆಯಿಂದ ಕಚ್ಚಿಸಿಕೊಂಡು ಕೆಂಡಾ ಮಂಡಲವಾಗಿರುವ  ಎಲ್ಲರೂ ಸೇರಿ ಚರ್ಚೆ ನಡೆಸಬಹುದು ತಿಗಣೆ ಹಾವಳಿ ಹೇಗೆ ತಡೆಯುವುದು ಎಂದು. ಸಭೆ ಗಿಭೆ ಮಾಡಿ ಡಾಲರ್ ಕಳೆಯುವುದಕ್ಕಿಂತ ಬಾಂಗ್ಲಾ ದೇಶದಿಂದಲೋ, ಅಥವಾ ನಮ್ಮ ದೇಶದಿಂದಲೋ ಒಂದಿಷ್ಟು ಐಡಿಯಾ ಎರವಲು ಪಡೆಯಬಾರದೆ? ತುಂಬಾ ವರ್ಷಗಳ ಹಿಂದಿನ ಮಾತು. ಒಮ್ಮೆ ಒಂದು ಜಾಹೀರಾತು ನೋಡಿದೆ. ತಿಗಣೆ ಕೊಲ್ಲುವ ಮೆಶಿನ್ ಬಗ್ಗೆ. ಕಂಪೆನಿ ಇರುವುದು ದೆಹಲಿಯಲ್ಲಿ. ೫ ರೂಪಾಯಿ ಸ್ಟಾಂಪ್ ಮಾತ್ರ ಫೀಸು. ಸರಿ ಹೇಗಾದರೂ ತಿಗಣೆ ತೊಲಗಿದರೆ ಸಾಕು ಅಂತ ಹೇಗೋ ೫ ರೂಪಾಯಿ ಹೊಂದಿಸಿ ಕಳಿಸಿದ್ದಾಯಿತು. ಬಂತು ಮೆಶಿನ್ ಮನೆಗೆ. ಕಾತುರದಿಂದ ಕವರ್ ತೆರೆದು ನೋಡಿದಾಗ ೨ ಚಿಕ್ಕ ಕಲ್ಲುಗಳು, ಮತ್ತೊಂದು ಕಡ್ಡಿ. ಅದರೊಂದಿಗೆ manual ಬೇರೆ. ಕಡ್ಡಿಯಿಂದ ತಿಗಣೆ ಹಿಡಿದು ಎರಡು ಕಲ್ಲುಗಳ ನಡುವೆ ಅದನ್ನು ಇಟ್ಟು ಜಜ್ಜಬೇಕು. ಎಂಥಾ ಮೋಸ ನೋಡಿ. ಒಂದು ಕಡೆ ೫ ರೂಪಾಯಿ ಹೋದ ದುಃಖ, ಮತ್ತೊಂದೆಡೆ ದೂರದ “ಜಂತರ್ ಮಂತರ್” (ದಿಲ್ಲಿ) ನಲ್ಲಿ ಕೂತು ಚೇಷ್ಟೆ ಮಾಡಿದವನ ಮೇಲೆ ಸಾವಿರ ತಿಗಣೆ ಹರಿಬಿಡುವಷ್ಟು ಕೋಪ.

ಅಮೆರಿಕೆಯ ಈ ತಿಗಣೆ ತಾಪತ್ರಯ ನೋಡಿ ಇರಾನ್, ಉತ್ತರ ಕೊರಿಯಾ, ಅಲ್ಕೈದ, ಲಿಬ್ಯ, ಕ್ಯೂಬಾ, ವೆನೆಜುಯೆಲ ಗಳಿಗೆ ಆನಂದವೋ ಆನಂದ. ನಮ್ಮ ಪಾಲಿಗೆ ದೊಡ್ಡ ತಿಗಣೆಯಾಗಿದ್ದ ಅಮೇರಿಕೆಗೆ ದೇವರು ಕಳಿಸಿದನಲ್ಲಾ ರಕ್ತ ಹೀರುವ ಸರಿಯಾದ ತಿಗಣೆಯನ್ನು ಎಂದು.                  

ಲೋಕಲ್ ಅನೆಸ್ಥೀಸಿಯ (ಮರೆವಳಿಕೆ) ಕೊಟ್ಟು ನಮಗೆ ತೊಂದರೆ ಆಗದಂತೆ ರಕ್ತ ಪಾನ ಮಾಡುವ ತಿಗಣೆಗಳಿಂದ  ಕಚ್ಚಿಸಿಕೊಳ್ಳುವುದೂ ಒಂದು ಮಜಾ.

ಇದೀಗ ಬಂದ ಸುದ್ದಿ: ಉತ್ತರ ಪ್ರದೇಶದ ಲಕ್ನೌ ದಲ್ಲಿ ಶಿಯಾ ಮುಸ್ಲಿಮರನ್ನು ತಿಗಣೆ ಅಂತಲೂ, ಸುನ್ನಿ ಮುಸ್ಲಿಮರನ್ನು ಸೊಳ್ಳೆ ಎಂದೂ ಕರೆಯುತ್ತಾರಂತೆ. ಅಂದ್ರೆ ನಾನು ಸೊಳ್ಳೆ.

ಅಗಲುವ ಮುನ್ನ…

ನೆನಪಿಡಿ: bedbug ಎನ್ನುವುದು ಒಂದು ಪದ. bed bug ಅಲ್ಲ.

 

twitter

picture-for-twitter-article 

twitter ಅಂದ್ರೆ ಚಿಲಿಪಿಲಿ ಆಲ್ವಾ? social networking ಸುದ್ದಿ ಮಾಡುತ್ತಿರುವ twitter ಒಂದು ಆಕರ್ಷಕ application. ಒಮ್ಮೆಗೆ ೧೪೦ ಅಕ್ಷರಗಳಲ್ಲಿ ಮಾತ್ರ ಬರೆಯಬಹುದಾದ ಈ ವ್ಯವಸ್ಥೆಯನ್ನು ಪರಿವಾರದವರೊಂದಿಗೆ ಮತ್ತು ಸಹೋದ್ಯೋಗಿಗಳೊಂದಿಗೆ ಚಿಕ್ಕ ಹರಟೆ ಹೊಡಯಲು ಉಪಯೋಗಿಸಬಹುದು. facebook ಮತ್ತು twitter ಇಂದಿನ ಯುವಪೀಳಿಗೆ ಮಾರು ಹೋದ ಅಂತರ್ಜಾಲ ತಾಣದ ಹೊಸ ಅನ್ವೇಷಣೆ. ಲೇಖನದೊಂದಿಗಿರುವ ಈ ಪುಟ್ಟ ಗುಬ್ಬಿ “ಬಡಪಾಯಿ ನನ್ನನ್ನೂ ವ್ಯಾಪಾರದ ವಸ್ತುವಾಗಿಸಿಬಿಟ್ಟಿರಾ” ಎಂದು ನಿಟ್ಟುಸಿರು ಬಿಡುತ್ತಿರುವಂತೆ ಕಾಣುತ್ತಿಲ್ಲವೇ