ಗೂದೆ ಹಣ್ಣು ಮತ್ತು ನೆರಳಚ್ಚು

ಗೂದೆ ಹಣ್ಣು ಮತ್ತು ನೆರಳಚ್ಚು…ಇವೆರಡೂ ಪದಗಳಿಗೆ ಇರುವ ಸಂಬಂಧವೇನು ಎಂದು ತಲೆ ಕೆರೆದು ಕೊಳ್ಳಬೇಡಿ. ಪ್ರೊ. ಜಿ. ವೆಂಕಟಸುಬ್ಬಯ್ಯ ನವರ (ವೆಂಕಟ ಸುಬ್ಬಯ್ಯ ಒಂದು ಪದವೋ, ಎರಡು ಪದವೋ?) ಸಾಮಾಜಿಕ ನಿಘಂಟು “ಇಗೋ ಕನ್ನಡ” ತಿರುವಿ ಹಾಕುತ್ತಿದ್ದಾಗ ಇವೆರಡು ಪದಗಳು ಸಿಕ್ಕಿದವು. ನಗಲು ಮತ್ತು ಅರಿತು ಕೊಳ್ಳಲು ಸಹಾಯ ಮಾಡಿದ ಈ ಎರಡು ಪದಗಳ ಬಗ್ಗೆ ನಿಮಗೂ ಬರೆದು ತಿಳಿಸೋಣ ಎಂದು ಬರೆಯುತ್ತಿದ್ದೇನೆ.

ಹೇ, ಹೋಗಿ ಇದರ “ಜೆರಾಕ್ಸ್” ಕಾಪಿ ತಗೊಂಡ್ಬಾರೋ ಎಂದು ಹೇಳುವುದನ್ನು ನಾವು ಕೇಳಿದ್ದೇವೆ. ಜೆರಾಕ್ಸ್ ಎಂದರೆ ನೆರಳಚ್ಚು ಎಂದು ನಿಘಂಟಿನಲ್ಲಿ ಅರ್ಥ ನೀಡಲಾಗಿದೆ. ಜೆರಾಕ್ಸ್ ಪದಕ್ಕೆ ಪರ್ಯಾಯವಾಗಿ ನೆರಳಚ್ಚು ಎನ್ನೋದು ನನಗಂತೂ ಸರಿ ತೋರಲಿಲ್ಲ. ನೆರಳು + ಅಚ್ಚು = ನೆರಳಚ್ಚು ತಾನೇ? ನೆರಳಿಗೆ ಆಕಾರ ಮತ್ತು ರೂಪ ಸ್ಪಷ್ಟವಾಗಿ  ಇರುವುದಿಲ್ಲ. ಆದರೆ ಜೆರಾಕ್ಸ್ ಕಾಪಿಗೆ ಇದೆರಡೂ ಇದೆ. ಅಸಲಿ ಪ್ರತಿ (copy) ಯ ರೀತಿಯಲ್ಲೇ ಇರುತ್ತದೆ ಜೆರಾಕ್ಸ್ ಕಾಪಿ. ಹಾಗಾಗಿ ಅದು ನೆರಳಚ್ಚು ಆಗಬಾರದು. ಅದು ನನ್ನ ಮಟ್ಟಿಗೆ ಪಡಿಯಚ್ಚು ಆಗಬೇಕು. ನೋಡ್ರೀ…ನಿಮ್ಮ ಮಗ ನಿಮ್ಮ ಪಡಿಯಚ್ಚು, ಆಲ್ವಾ? ಎಂದು ಯಾರಾದರೂ ಅಂದಾಗ ತಂದೆ ಎದೆ ಉಬ್ಬಿಸುತ್ತಾನೆ, authenticity ಪ್ರೂವ್ ಆದ ಸಂಭ್ರಮದಲ್ಲಿ. ಇಲ್ಲಿ ಪಡಿಯಚ್ಚು ಎಂದರೆ ಥೇಟ್ ತಂದೆ ರೀತಿ ಎಂದು. ಹಾಗಾಗಿ ಜೆರಾಕ್ಸ್ ಕಾಪಿ ಗೆ ಪಡಿಯಚ್ಚು ಎಂದರೆ ತಪ್ಪಾಗಬಹುದೋ?

ಜೆರಾಕ್ಸ್ ಒಂದು ಕಂಪೆನಿ. ಅಮೇರಿಕಾ ಮೂಲದ್ದು. ಯಾವುದಾದರೂ ಒಂದು ಕಂಪೆನಿ ಪ್ರಪ್ರಥಮ ಬಾರಿಗೆ ಒಂದು ಉತ್ಪನ್ನ ತಂದಾಗಲೋ, ಅಥವಾ ಉತ್ಪನ್ನವೊಂದು ತುಂಬಾ ಜನಪ್ರಿಯ ಆದಾಗಲೋ ಉತ್ಪಾದಕ ರ ಹೆಸರು ಅದಕ್ಕೆ ತಗುಲಿ ಕೊಳ್ಳುತ್ತದೆ. ಯಾವುದೇ ಕಬ್ಬಿಣದ ಬೀರುವಿಗೆ ಗೋದ್ರೆಜ್ ಬೀರು ಎನ್ನುತ್ತಾರೆ. ಅದು ಗೋದ್ರೆಜ್ ನಿರ್ಮಿತವಲ್ಲದಿದ್ದರೂ. ಇದೇ ಗತಿ ಜೆರಾಕ್ಸ್ ಗೂ ಬಂದಿದ್ದು. 

ಟೊಮೆಟೋ ಹಣ್ಣಿಗೆ ಕನ್ನಡದಲ್ಲಿ ಪರ್ಯಾಯ ಪದವಿದೆಯೇ? ಇಲ್ಲದೆ ಏನು, ಅದೇ “ಗೂದೆ ಹಣ್ಣು” ಎಂದು ಹೇಳುತ್ತದೆ ಈ ಸಾಮಾಜಿಕ ನಿಘಂಟು. ಗೂದೆ? “ಆರ್ ಯೂ ಶುಅರ್” ಎಂದು ಬಾಯಗಲಿಸಬೇಡಿ. ಹೌದು ಗೂದೆ ಹಣ್ಣಿಗೆ ಆಂಗ್ಲ ಭಾಷೆಯಲ್ಲಿ ಟೊಮೇಟೋ ಎನ್ನುತ್ತಾರೆ. ಬಹುಶಃ “ಗೂದೆ” (ಓಯ್, ಗೂದೆ ಎಲ್ಲೋಗಿದ್ದೆ?) ಎನ್ನುವ ಪದ ಕಸಿವಿಸಿಗೆ ಎಡೆ ಮಾಡಿ ಕೊಡೋದ್ರಿಂದಲೂ, ಮತ್ತು ಅದರ ಮೂಲ ಪದ ಸಂಸ್ಕೃತದ “ಗುದ” ದ ಮೂಲಕ ಬಂದಿದ್ದರೊಂದಲೋ ಏನೋ, ಅದರ ಸಹವಾಸವೇ ಬೇಡ, ಪರಂಗಿ ಭಾಷೆಯೇ ಚೆಂದ ಎಂದು ಟೊಮೇಟೋ ಬಳಕೆಯನ್ನು ಆರಂಭಿಸಿರಬಹುದು ನಮ್ಮ ಹಿರಿಯರು, ಅಲ್ಲವೇ?

ಆಂಗ್ಲದ ಎಲ್ಲಾ ಪದಗಳಿಗೆ ಪರ್ಯಾಯ ಕನ್ನಡ ಪದ ಉಪಯೋಗಿಸೋದು ಕನ್ನಡಮ್ಮನ ಸೇವೆ ಎಂದು ಕೆಲವರು ತಿಳಿದರೆ ಇನ್ನೂ ಕೆಲವರು ‘fad’ ಗೆ ಕಟ್ಟು ಬಿದ್ದು “ಅಭಿಯಂತರರು” ಎಂದು ಹೇಳಲಾಗದೆ ಹೆಣಗಾಡುತ್ತಾರೆ.  ಮೊಬೈಲ್ ಉಪಕರಣಕ್ಕೆ “ನಡೆಯುಲಿ” ಎಂದೂ ಹೇಳುತ್ತಾರೆ.

ಕೊನೆಯದಾಗಿ ಪ್ರೊ. ಜಿ. ವೆಂ ಅವರು ಆಂಗ್ಲ ಭಾಷೆಯ fundamentalist ಪದಕ್ಕೆ ಕನ್ನಡದಲ್ಲಿ “ಮತಾಂಧ” ಎಂದು ಹೇಳಿದ್ದಾರೆ. ಇದು ತಪ್ಪು ಎಂದು ನನ್ನ ಅಭಿಪ್ರಾಯ. ನೀವೇನಂತೀರಾ?        

ಹಾಗೆಯೇ, ಪದ ಮತ್ತು ಶಬ್ದದ ವ್ಯತ್ಯಾಸವೇನು? ನನಗೆ ಗೊತ್ತಿಲ್ಲ. ಇಗೋ ಕನ್ನಡಲ್ಲೂ ಇದು ಸಿಕಿಲ್ಲ.

“ಇಗೋ ಕನ್ನಡ” ಪುಸ್ತಕದ ಬಗ್ಗೆ ಒಂದು ಮಾತು. ಇಗೋ ಕನ್ನಡ ಒಂದು ಸೊಗಸಾದ ಪುಸ್ತಕ. ಭಾಷೆಗಳ ಬೆಳವಣಿಗೆ ಬಗ್ಗೆ ಬಹಳ passionate ಆಗಿ ಬರೆದಿದ್ದಾರೆ ಪ್ರೊ. ಜಿ.ವೆಂ ಅವರು. ಕೊಳ್ಳಲೇ ಬೇಕಾದ ಪುಸ್ತಕ, ನವಕರ್ನಾಟಕ ದವರು ಸುಂದರವಾಗಿ ಪ್ರಕಾಶಿಸಿದ್ದಾರೆ. ಕೇವಲ ೨೭೫ ರೂಪಾಯಿ. fad ಗೆ ಕಟ್ಟು ಬಿದ್ದು ನಕಲಿ ಪೋಲೋ ಟೀ ಷರ್ಟ್ ಖರೀದಿಸಿ  ಸೋಲುವ ಬೆಲೆ.

ನನ್ ಟೈಮ್ ಸರಿಯಿಲ್ಲ ಅಷ್ಟೇ !

ಟೈಮ್ ಸರಿಯಿಲ್ಲ, ಇದು ನಾವು ಕೇಳುವ ದೂರು . ನಮ್ಮ ಅರಿವುಗೇಡಿತನದಿಂದ ಅಥವಾ ಬೇರಾವುದಾರೂ ಕಾರಣದಿಂದ  ಬರುವ ಸಂಕಷ್ಟಗಳಿಗೆ ಸುಲಭ ಮತ್ತು ಪುಕ್ಕಟೆಯಾಗಿ ಸಮಯವನ್ನೂ ಜರೆಯುವುದು, ದೂರುವುದು ನಮ್ಮ ತಾತ ಮುತ್ತಾತಂದಿರು ನಮಗೆ ಬಳುವಳಿಯಾಗಿ ನೀಡಿದ ಜಾಯಮಾನ.  ಇಂದು ಬೆಳಿಗ್ಗೆ ನಮ್ಮ ಕಂಪೆನಿಯಲ್ಲಿ ಸೇಲ್ಸ್ ವಿಭಾಗದಲ್ಲಿ  ಕೆಲಸ ಮಾಡುವ ಒಬ್ಬರು ಬಂದು ಹೇಳಿದರು, ನಿನ್ನೆ ರಾತ್ರಿ ನನ್ನ ಲ್ಯಾಪ್ ಟಾಪ್ ಕಳುವಾಯಿತು. ಫ್ಲಾಟ್ ಹೊರಗೆ ನಿಲ್ಲಿಸಿದ್ದ ಕಾರಿನ ಗಾಜನ್ನು ಒಡೆದು ಕಳ್ಳತನ ಮಾಡಿದರು ಎಂದು ಹೇಳಿ ಏನು ಮಾಡೋದು, ನನ್ನ ಟೈಮ್ ಸರಿಯಿಲ್ಲ ಅಷ್ಟೇ ಎಂದು ಮರುಗಿದರು. ಈ ರೀತಿಯ ಕಹಿ ಅನುಭವ ಈ ವ್ಯಕ್ತಿಗೆ ಮೊದಲನೆಯದಲ್ಲ. ಕಳೆದ ವರ್ಷ ಅವರ ಫ್ಲಾಟ್ ಒಳಕ್ಕೆ ನುಗ್ಗಿ ಪತ್ನಿಯ ಒಡವೆಗಳನ್ನು ಕದ್ದೊಯ್ದಿದ್ದರು ಕಳ್ಳರು.  ಆದರೆ ಈ ಕಳ್ಳತನದ ಬಗ್ಗೆ ಮಾತ್ರ ಅವರಿಗೆ ನಿಖರವಾದ ಮಾಹಿತಿ ಇತ್ತು. ಅವರಿಗೆ ಹೊಸತಾಗಿ ಪರಿಚಯವಾಗಿದ್ದ ವ್ಯಕ್ತಿ ಮಾಡಿದ್ದೆಂದು ಅವರಿಗೆ ಚೆನ್ನಾಗಿ ತಿಳಿದಿದ್ದರೂ ಪೊಲೀಸರಿಗೆ ದೂರು ಕೊಡಲು ಹೆದರಿದರು. ಏಕೆಂದರೆ ಇಲ್ಲಿನ ಪೊಲೀಸರು ಲಂಚ, ವಶೀಲಿ ಬಾಜಿಗೆ ಬೀಳದೆ ಮುಲಾಜಿಲ್ಲದೆ ಬಾಯಿ ಬಿಡಿಸಿ ಬಿಡುತ್ತಾರೆ. ಆ ವ್ಯಕ್ತಿಯ ವಿರುದ್ಧ ದೂರು ನೀಡಿದರೆ ನಾಳೆ ಭಾರತದಲ್ಲಿ ತನಗೆ ತೊಂದರೆ ಆಗಬಹುದು ಎಂದು ಹೆದರಿ ಪೊಲೀಸ್ ದೂರು ಕೊಡಲು ಒಪ್ಪಲಿಲ್ಲ. ಎಲ್ಲಾ ನನ್ ಟೈಮ್ ಅಷ್ಟೇ ಎಂದು ಕೈ ಚೆಲ್ಲಿ ಕೂತ ಅವರಿಗೆ ನಾನು ಹೇಳಿದೆ, ನಾವು ಟೈಮ್ ಅನ್ನು ದೂರುವುದು ಸರಿಯಲ್ಲ. ಜೀವನದಲ್ಲಿ ಅದೇನು ಸಂಭವಿಸಬೇಕೋ ಅದು ಆಗಿಯೇ ತೀರುತ್ತದೆ. ನಮ್ಮಿಂದ ಅದನ್ನು  ತಡೆಯಲು ಸಾಧ್ಯವಿಲ್ಲ. ಎಲ್ಲದಕ್ಕೂ ದೇವರ ಮೊರೆ ಹೋಗಬೇಕೆ ಹೊರತು ಸಮಯವನ್ನೂ ದೂರುವುದು ಸರಿಯಲ್ಲ ಎಂದು ನಯವಾಗಿ ಹೇಳಿದೆ. ಆದರೆ ಬೆಲೆ ಬಾಳುವ ವಸ್ತುಗಳನ್ನು ಕಳೆದು ಕೊಂಡ ಆತ ಮಾತ್ರ ‘ಸಮಯ’ ದ ಪರವಾಗಿ ನಿಂತ ನನ್ನ ನಿಲುವನ್ನು ಒಪ್ಪಿದಂತೆ ಕಾಣಲಿಲ್ಲ.

ಮೇಲೆ ಹೇಳಿದ ರೀತಿಯ ಘಟನೆಗಳನ್ನು ನಾವು ದಿನವೂ ನೋಡುತ್ತಿರುತ್ತೇವೆ, ಕೇಳುತ್ತಿರುತ್ತೇವೆ. ಒಂದರ ಹಿಂದೆ ಒಂದು ಅವಘಡಗಳು ಸಂಭವಿಸಿದರಂತೂ ಕೇಳಬೇಡಿ’ ಟೈಮ್’ ನ ಗೋಳು. ಸಮಯದ ಜನ್ಮ ಜಾಲಾಡುತ್ತಾರೆ. ಪರಿಹಾರ ಕಾಣಲೆಂದು ಜ್ಯೋತಿಷ್ಯರ,  ಮಂತ್ರವಾದಿಗಳ  ಮೊರೆಯೂ ಹೋಗುತ್ತಾರೆ. ತಂತ್ರ ಯಂತ್ರ ಕಟ್ಟಿಸಿ ಕೊಳ್ಳಲು ಎಂದು  ಮತ್ತಷ್ಟು ಕಳೆದುಕೊಳ್ಳುತ್ತಾರೆ. ಆದರೆ ನಮಗೆದುರಾಗುವ ಎಲ್ಲಾ ಪ್ರಾರಬ್ದ ಗಳಿಗೂ ನಿಜವಾಗಿಯೂ ‘ಟೈಮ್’’ ಅಥವಾ ಕೆಟ್ಟ ಘಳಿಗೆ ಕಾರಣವೇ?  

ಕಾಲವನ್ನು  ಸಂವತ್ಸರ ಎಂದು ಕರೆಯುತ್ತಾರೆ. ವತ್ಸರ ಎಂದರೆ ದೇವರು. ಅಂದರೆ ಕಾಲವೇ ದೇವರು. ಸಂವತ್ಸರ ಎಂದರೆ ವರ್ಷ ಎಂದಲ್ಲ. ಪ್ರತೀ ಕ್ಷಣ, ನಿಮಿಷ, ಘಂಟೆಗಳು ಸಂವತ್ಸರವೇ. ಏಕೆಂದರೆ ಈ ಕ್ಷಣ, ನಿಮಿಷ, ಘಂಟೆಗಳಿಂದ ದಿನಗಳು, ತಿಂಗಳುಗಳಾಗಿ ವರ್ಷ ಎಂದೆನ್ನಿಸಿ ಕೊಳ್ಳುತ್ತದೆ. ಅಂದರೆ ನಾವು ನಮಗೆ ಎದುರಾಗುವ ಕಷ್ಟ, ದುಃಖ ದುಮ್ಮಾನಗಳಿಗೆ  ಸಮಯವನ್ನು ಹಳಿದರೆ ದೇವರನ್ನು ತೆಗಳಿದಂತಾಗುತ್ತದೆ, ಅಲ್ಲವೇ?    

ತೃಣಮಪಿ ನಃ ಚಲತಿ. ದೇವನ ಅಪ್ಪಣೆಯಿಲ್ಲದೆ ಹುಲ್ಲೂ ಕೂಡ ಚಲಿಸದು ಎನ್ನುವ ಅರ್ಥದ ಈ ಮಾತು ಇಸ್ಲಾಂ ಧರ್ಮೀಯರ “ಪವಿತ್ರ ಕುರ್’ಆನ್” ನಲ್ಲಿಯೂ ಇದೆ. ಪ್ರತೀ ಕಾರ್ಯವೂ, ಪ್ರತೀ ಘಟನೆಯೂ, ಎಲ್ಲಾ ಒಳ್ಳೆಯ ಮತ್ತು ಕೆಟ್ಟ ಘಟನೆಗಳು ದೇವನ ಅಪ್ಪಣೆಯಿಲ್ಲದೆ ನಡೆಯುವುದಿಲ್ಲ ಎಂದು ಆಸ್ತಿಕರು ಬಲವಾಗಿ ನಂಬುವರು. ಅದರಲ್ಲೂ ಮುಸ್ಲಿಮರಲ್ಲಿ ಈ ನಂಬಿಕೆ ಹೆಚ್ಚು. ಯಾವುದೇ ತೆರನಾದ ಅವಘಡಕ್ಕೂ ಕಾಲವನ್ನಾಗಲಿ, ದುರದೃಷ್ಟ ವನ್ನಾಗಲೀ ಟೀಕಿಸಲು, ಶಪಿಸಲು ಹೋಗದೆ ಎಲ್ಲಾ ದೈವೇಚ್ಛೆ ಎಂದು ಇರುವುದರಲ್ಲೇ ತೃಪ್ತಿ ಕಾಣುತ್ತಾರೆ. ಒಮ್ಮೆ ಪಾಶ್ಚಾತ್ಯ ದೇಶವೊಂದರ ಯಾತ್ರಿಯೊಬ್ಬ (ನೆದರ್ ಲ್ಯಾಂಡ್ಸ್ ನ van der post ಎಂದು ನನ್ನ ನೆನಪು) ಸಹರಾ ಮರುಭೂಮಿಯ ಮುಖಾಂತರ ಪ್ರಯಾಣ ಬೆಳೆಸಿದಾಗ ಮೊರಾಕ್ಕೋ ದೇಶಕ್ಕೆ ಸೇರಿದ ಮರುಭೂಮಿಯಲ್ಲಿ ಒಂದು ದೃಶ್ಯ ಕಾಣಲು ಸಿಗುತ್ತದೆ.  ಮರುಭೂಮಿಯಲ್ಲಿ ವಾಸಿಸುವ ಬೆದೂಯಿನ್ (bedouin) ಬುಡಕಟ್ಟಿನವರು ಒಂದು ಕಡೆ ತಾತ್ಕಾಲಿಕ ಡೇರೆ ಹಾಕಿದ್ದನ್ನು ಈತ ಕಾಣುತ್ತಾನೆ. ಅವರೊಂದಿಗೆ ಹರಟುತ್ತಾ ಇದ್ದಾಗ ಒಮ್ಮೆಗೆ ಈ ಬಿರುಗಾಳಿ ಅಪ್ಪಳಿಸಿ ಕುರಿ, ಕೋಳಿ, ಒಂಟೆ, ಡೇರೆ, ಸಾಮಾನು ಪಾತ್ರೆ ಪಗಡಿ ಎಲ್ಲವನ್ನೂ ಬಾಚಿಕೊಂಡು ಹೋಗಿ ಬಿಡುತ್ತದೆ. ಮರುಭೂಮಿಯ ಬಿರುಗಾಳಿ (sand storm) ಗೊತ್ತೇ ಇದೆಯಲ್ಲಾ. ತನ್ನ ಹಾದಿಗೆ ಅಡ್ಡ ಬರುವ ಯಾವುದನ್ನೂ ಬಿಡದೆ ಬಾಚಿಕೊಂಡು ಹೋಗುವ ಬಿರುಗಾಳಿ. ನಮಗೆ ಪರಿಚಯವಿರುವ ಸುಂಟರ ಗಾಳಿಯಂತೆ. ಸಾವಿರ ಸುಂಟರ ಗಾಳಿ ಕೂಡಿಕೊಂಡು ಧಾಳಿ ಮಾಡಿದರೆ ಹೇಗಿರುತ್ತೋ ಹಾಗಿರುತ್ತದೆ ಮರುಭೂಮಿಯ ಬಿರುಗಾಳಿ. ಸುಮಾರು ಹೊತ್ತಿನ ನಂತರ ಬಿರುಗಾಳಿಯ ಅಬ್ಬರ ನಿಂತ ಮೇಲೆ ಒಂದೇ ಒಂದು ಶಬ್ದವನ್ನೂ ಆಡದೆ, ತುಟಿ ಪಿಟಿಕ್ಕನ್ನದೆ ತಮ್ಮ ಕೆಟ್ಟ ಘಳಿಗೆಯನ್ನು ತೆಗಳದೆ, ಇದೊಂದು ಸಾಮಾನ್ಯ ಘಟನೆ ಎನ್ನುವ ಭಾವದಿಂದ  ಸಿಕ್ಕಿದ್ದೇ ಶಿವ ಎಂದು ಬೀಸಿದ ಬಿರುಗಾಳಿ ಅಳಿದುಳಿಸಿದ ಸಾಮಾನುಗಳನ್ನು ಅತ್ಯಂತ ಶ್ರದ್ಧೆಯಿಂದ, ಜೋಪಾನದಿಂದ, ಸಂಯಮದಿಂದ ಹೆಕ್ಕುತ್ತಿದ್ದನ್ನು ನೋಡಿದ ಈ ಪಾಶ್ಚಾತ್ಯ ದಂಗಾಗಿ ನಿಲ್ಲುತ್ತಾನೆ. ಕೆಲವೇ ಕ್ಷಣಗಳಲ್ಲಿ ತಮ್ಮ ಬದುಕನ್ನೇ ಮೂಲೋತ್ಪಾಟನೆ ಮಾಡಿದ ಬಿರುಗಾಳಿಯನ್ನು ಶಪಿಸದೇ, ಅತ್ಯಂತ ಸಮಯದಿಂದ ಸಹಿಸಿ, ಶಾಂತ ಚಿತ್ತತೆಯಿಂದ ಅಳಿದುಳಿದುದದನ್ನು ಆರಿಸಿ ಕೊಳ್ಳುತ್ತಿದ್ದ ಬೆದೂಯಿನ್ ರನ್ನು ಕಂಡು ಆತನಿಗೆ ತನ್ನ ಕಣ್ಣುಗಳ ನ್ನು ನಂಬಲಾಗಲಿಲ್ಲ. ಅಲ್ಲಿದ್ದ ಒಬ್ಬನಿಗೆ ಈ ಕುರಿತು ಕೇಳಿದಾಗ ಅವನು ಹೇಳಿದ್ದು, ನಮಗೆ ಈ ಸ್ಥಿತಿ ತಂದ ಬಿರುಗಾಳಿಯನ್ನು ನಾನು ಶಪಿಸಿ ಪಡೆಯುವುದಾದರೂ ಏನನ್ನು? ಹೋದ ಸಾಮಾನುಗಳು, ಆದ ನಷ್ಟ, ತಿರುಗಿ ಬರುತ್ತದೆಯೇ? ಹೆಚ್ಚು ವಿಳಂಬ ಮಾಡದೇ “ಅಲ್ಹಂದು ಲಿಲ್ಲಾಹ್’” (ದೇವರಿಗೆ ಸರ್ವಸ್ತುತಿ) ಎಂದು ಇರುವುದನ್ನು ಆರಿಸಿ ಕೊಂಡು ಮುಂದಿನ ದಾರಿ ನೋಡುವುದು ತಾನೇ ಜಾಣತನ ಎಂದು ಆತನಿಗೆ ಮರು ಪ್ರಶ್ನೆ ಹಾಕಿದಾಗ ಬಿಳಿಯ ಆ ಪ್ರಶ್ನೆಗೆ ಉತ್ತರ ಕಾಣದೆ ತನ್ನ ದೇಶದಲ್ಲಾಗಿದ್ದರೆ ಏನು ಮಾಡುತ್ತಿದ್ದರು ಎಂದು ಯೋಚಿಸುತ್ತಾ ತನ್ನ ದಾರಿ ಹಿಡಿಯುತ್ತಾನೆ.  

ಎಂಥದ್ದೇ ಗಂಭೀರವಾದ, ಕ್ಲಿಷ್ಟಕರವಾದ, ದಬ್ಬಾಳಿಕೆಗೆ ಒಳಗಾದಾಗ, ಮಾನಸಿಕ ಕ್ಲೇಶ, ದೈಹಿಕ ನೋವು, ಅಗಲಿಕೆ ಬಂದಾಗಲೂ ಅರಬರು ಹೇಳುವುದು “ಅಲ್ಹಂದು ಲಿಲ್ಲಾಹ್”, ಅಥವಾ “ನಿನ್ನಿಂದಲೇ ಬಂದೆವು, ನಿನ್ನಲ್ಲಿಗೇ ನಾವು ಮರಳುವೆವು, (ಇನಾ ಲಿಲ್ಲಾಹಿ ವಯಿನ್ನಾ ಇಲೈಹಿ ರಾಜಿಊನ್) ಎನ್ನುವ ಮಾತನ್ನು ಹೇಳುತ್ತಾರೆ. ವಿಶೇಷವಾಗಿ ನಿಧನದ ವಾರ್ತೆ ಕೇಳಿದಾಗ ಈ ಮಾತನ್ನು ಹೇಳಲೇ ಬೇಕು. ಅಯ್ಯೋ ಪಾಪ, ಯಾವಾಗ ಸತ್ರು, ಪಾಪ, ಎಷ್ಟು ಚೆನ್ನಾಗಿದ್ರು, ಚಿಕ್ಕ ವಯಸ್ಸು, ಸ್ವಲ್ಪ ಮೊದಲು ತಾನೇ  ಮಾತನಾಡಿಸಿದ್ದೆ…. ಎಂದೆಲ್ಲಾ ಬಡಬಡಿಸುವ ಗೋಜಿಗೆ ಅರಬರು ಹೋಗುವುದಿಲ್ಲ. ಏಕೆಂದರೆ ಎಲ್ಲವೂ ವಿಧಿಯ ಕೈಯ್ಯಲ್ಲಿ, ಆ ವಿಧಿಯನ್ನು ಕಾರ್ಯಗತ ಗೊಳಿಸುವವನೇ ಮೇಲೆ ಕೂತಿರುವ ಆ ಪರಮಾತ್ಮ. ಮತ್ತೊಂದು ಹದೀಸ್ ಸೂಕ್ತದಲ್ಲಿ “ಆದಮನ (ಆದಿ ಮಾನವ) ಮಗ ತಪ್ಪು ತಿಳಿದಿದ್ದಾನೆ. ಘಳಿಗೆಯನ್ನು ಅವನು ಶಪಿಸುತ್ತಾನೆ ಆದರೆ ನಾನೇ ಆಗಿದ್ದೇನೆ ಆ ಘಳಿಗೆ. ಒಳಿತು ಮತ್ತು ಎಲ್ಲವೂ ನನ್ನ ಕೈಗಳಿಂದಲೇ ಬರುತ್ತವೆ. ಮತ್ತು ಹಗಲನ್ನು ಹಿಂಬಾಲಿಸುವ ಇರುಳು ಸಹ ನನ್ನಿಂದಲೇ” ಎಂದು ದೇವರು ಹೇಳುತ್ತಾನೆ.       

ನಮ್ಮ ಅಜಾಕರೂಕತೆಯಿಂದ ಉಂಟಾಗುವ ಅನಾಹುತಗಳಿಗೆ ಸುಖಾ ಸುಮ್ಮನೆ ಸಮಯವನ್ನು ಶಿಲುಬೆಗೆ ಏರಿಸದೆ ಹೆಚ್ಚು ಜಾಗರೂಕರಾಗೋದೇ ಲೇಸು ಅಲ್ಲವೇ?

ರಾತ್ರಿ ತರಗತಿ

ರಾಮನ್ ಮತ್ತು ನಾರಾಯಣ್ ಆಫೀಸಿನಲ್ಲಿ ಹರಟುತ್ತಿದ್ದರು.

ರಾಮನ್:  ನಾರಾಯಣ, ನಾನು ಕಳೆದ ಐದು ತಿಂಗಳುಗಳಿಂದ ರಾತ್ರಿ ತರಗತಿಗಳಿಗೆ ಹೋಗುತ್ತಿದ್ದೇನೆ, ಮುಂದಿನ ವಾರ ನನ್ನ ಪರೀಕ್ಷೆ ಇದೆ.

ನಾರಯಣ್: ಓಹ್

ರಾಮನ್: ಉದಾಹರಣೆಗೆ ಗ್ರಹಾಮ್ ಬೆಲ್ ಯಾರೆಂದು ನಿನಗೆ ಗೊತ್ತಾ?

ನಾರಾಯಣ್: ಇಲ್ಲ.

ರಾಮನ್: ಗ್ರಹಾಮ ಬೆಲ್ ಅಲ್ಲವೇ ೧೮೭೬ ರಲ್ಲಿ ಟೆಲಿ ಫೋನ್ ಕಂಡುಹಿಡಿದವನು? ನೀನು ರಾತ್ರಿ ತರಗತಿಗೆ ಹೋದರೆ ಇವೆಲ್ಲಾ ತಿಳಿಯುತ್ತವೆ.

ಮಾರನೆ ದಿನ…

ರಾಮನ್: ಹೋಗಲಿ ನಿನಗೆ ಅಲೆಕ್ಸಾಂಡರ್ ಡೂಮ ಯಾರೂಂತ ಗೊತ್ತಾ?

ನಾರಾಯಣ್: ಇಲ್ಲ

ರಾಮನ್: ಅವನು ಸುಪ್ರಸಿದ್ಧ ಕಾದಂಬರಿಕಾರ. ಅವನೇ three musketeers ಪುಸ್ತಕ ಬರೆದದ್ದು.

ಹೀಗೆ ಪ್ರತೀ ದಿನ ರಾಮನ್ ತನ್ನ ಜ್ಞಾನದ ಬಗ್ಗೆ ನಾರಾಯಣನಲ್ಲಿ ಕೊಚ್ಚುತ್ತಿದ್ದ. ಬೇಸತ್ತಿದ ನಾರಾಯಣ್ ಕೇಳ್ದ, ರಾಮನ್, ನಿನಗೆ ಬಾಲಕೃಷ್ಣನ್ ಕುಪ್ಪುಸ್ವಾಮಿ ಯಾರೂಂತ ಗೊತ್ತಾ?

ರಾಮನ್: ಇಲ್ಲ, ಗೊತ್ತಿಲ್ಲ.

ನಾರಾಯಣ್: ಅಯ್ಯೋ, ಅವನೇ ಇಲ್ಲವೇ ನಿನ್ನ ಹೆಂಡತಿಯ ಜೊತೆ ರಾತ್ರಿಯಲ್ಲಿ ತಿರುಗುತ್ತಾ ಇರೋದು. ನೀನು ಈ ರಾತ್ರಿ ತರಗತಿಗಳನ್ನು ನಿಲ್ಲಿಸಿದರೆ ಇದು ನಿನಗೆ ತಿಳಿಯಬಹುದು” ಎಂದು ಹೇಳಿದ.

moral of the story:

ಜೀವನದಲ್ಲಿ ಸಾಮಾನ್ಯ ಜ್ಞಾನಕ್ಕಿಂತ ಅರಿಯಬೇಕಾದ ಬೇರೆ ಸಂಗತಿಗಳೂ ಇವೆ

ಕೋಪ ಬಂದಾಗ ಒಂದು ಮೊಳೆ

ಒಬ್ಬ ಹುಡುಗ ಮಹಾ ಕೋಪಿಷ್ಟ. ಸುಲಭವಾಗಿ ಕೆರಳುತ್ತಿದ್ದ. ಇದನ್ನು ಕಂಡು ರೋಸಿದ ತಂದೆ ತನ್ನ ಮಗನಿಗೆ ಒಂದು ಚೀಲ ತುಂಬಾ ಮೊಳೆಗಳನ್ನು ಕೊಟ್ಟು ಪ್ರತೀ ಸಲ ಕೋಪ ಬಂದಾಗ ಮನೆಯ ಹಿಂದಿನ ಗೋಡೆಗೆ ಒಂದು ಮೊಳೆ ಹೊಡೆಯಲು ಹೇಳುತ್ತಾನೆ. ಉತ್ಸಾಹದಿಂದ ಹೋಗುವ ಹುಡುಗ ಮೊದಲ ದಿನವೇ ೩೭ ಮೊಳೆಗಳನ್ನು ಹೊಡೆದು ಹಾಕುತ್ತಾನೆ ಗೋಡೆಗೆ.  ಒಂದೆರಡು ವಾರಗಳಲ್ಲಿ ತನ್ನ ಕೋಪ ತಾಪ ಎಲ್ಲಾ ತಹಬಂದಿಗೆ ಬಂದು ಗೋಡೆಗೆ ಹೊಡೆಯಬೇಕಾದ ಮೊಳೆಗಳು ಸಂಖ್ಯೆಯಲ್ಲಿ ಕಡಿಮೆಯಾಗುತ್ತವೆ. ತನ್ನ ಅಪ್ಪ ಹೇಳಿದ ಹಾಗೆ ಮೊಳೆ ಹೊಡೆಯುವುದಕ್ಕಿಂತ ಸುಲಭ ತನ್ನ ಕೋಪವನ್ನು ನಿಯಂತ್ರಿಸುವುದು ಎಂದು ಈ ಹೊತ್ತಿಗಾಗಲೇ ಹುಡುಗ ಅರಿತು ಕೊಳ್ಳುತ್ತಾನೆ. ಕೊನೆಗೊಂದು ದಿನ ಹುಡುಗ ಮೊದಲಿನ ಥರ ಕೋಪಿಷ್ಠನಾಗದೇ ಮಂದಸ್ಮಿತನಾಗುತ್ತಾನೆ, ಸಂಯಮಿಯಾಗುತ್ತಾನೆ, ಮೊಳೆಯ ಚೀಲ ಬರಿದಾಗುತ್ತದೆ. ಈ ವಿಷಯವನ್ನು ತನ್ನ ತಂದೆಗೆ ಬಂದು ಹೇಳಿದಾಗ ತಂದೆ ಹೇಳುತ್ತಾನೆ, ಮಗನೇ, ಈಗ ಹೋಗಿ ನೀನು ಹೊಡೆದ ಮೊಳೆಗಳನ್ನೆಲ್ಲಾ ದಿನಕ್ಕೊಂದರಂತೆ ಕೀಳು ಎಂದು. ಮತ್ತೊಮ್ಮೆ ಗೋಡೆ ಕಡೆ ಮರಳಿದ ಹುಡುಗ ಸಾವಧಾನದಿಂದ ದಿನಕ್ಕೊಂದರಂತೆ  ಒಂದೊಂದೇ ಮೊಳೆ ಗಳನ್ನು ಕೀಳುತ್ತಾನೆ. ಒಂದೆರಡು ವಾರಗಳ ತರುವಾಯ ಹುಡುಗ ಬಂದು ತಾನು ಎಲ್ಲಾ ಮೊಳೆಗಳನ್ನು ಕಿತ್ತ ವಿಷಯ ಹಿಗ್ಗುತ್ತಾ ತಂದೆಗೆ ತಿಳಿಸುತ್ತಾನೆ. ಮಗನನ್ನು ನೋಡಿ ಮುಗುಳ್ನಗುತ್ತಾ ಅವನ ಕೈ ಹಿಡಿದು ಕೊಂಡು ಹಿತ್ತಲಿನ ಗೋಡೆಗೆ ಬಂದ ತಂದೆ ಮಗನ ತಲೆ ತಡವುತ್ತಾ ಹೇಳುತ್ತಾನೆ, ಮಗೂ, ಎಷ್ಟು ಸುಂದರ ಕೆಲಸ ನೀನು ಮಾಡಿದೆ, ಆದರೆ ನೋಡು ಒಮ್ಮೆ ಗೋಡೆಯನ್ನು. ಮೊದಲಿನ ಹಾಗಿದೆಯೇ ಗೋಡೆ? ಎಷ್ಟೊಂದು ತೂತುಗಳು ಬಿದ್ದಿವೆ ನೋಡು ಗೋಡೆಯ ಮೇಲೆ. ಈ ಗೋಡೆ ಮೊದಲಿನ ಹಾಗೆ ಆಗಲು ಸಾಧ್ಯವೆ?  ಎಂದಿಗೂ ಇಲ್ಲ. ನೀನು ಕೋಪದಲ್ಲಿ ಆಡಿದ ಮಾತುಗಳೂ ಸಹ ಹಾಗೆಯೇ. ನಿನ್ನ ಕೋಪದ ಮಾತುಗಳು, ಜನರಿಗೆ ಮಾಡಿದ ನೋವು ನೀನು ಮೊಳೆಗಳಿಂದ ಗೋಡೆಗೆ ಮಾಡಿದ ತೂತುಗಳಂತೆ.  ಅವೆಂದೂ ಮಾಸಲಾರವು. ಒಬ್ಬನಿಗೆ ಚೂರಿ ಇರಿದು ಆ ಚೂರಿಯನ್ನು ಹಿಂದಕ್ಕೆ ಎಳೆಯಬಹುದು, ಆದರೆ ಆ ಚೂರಿ ಮಾಡಿದ ಗಾಯ? ಆ ಗಾಯ ಮಾಸುವುದೇ? ನೀನೆಷ್ಟೇ ಕ್ಷಮೆ ಕೋರಿದರೂ ಆ ಗಾಯ ಅಲ್ಲೇ ಇರುತ್ತದೆ.

ಅನರ್ಘ್ಯ ರತ್ನಗಳಂಥ ಮಾತುಗಳನ್ನು ತನ್ನ ಪ್ರೀತಿಯ ತಂದೆಯ ಬಾಯಿಂದ ಆಲಿಸಿದ ಹುಡುಗ ದಂಗುಬಡಿದವನಂತೆ, ತಟಸ್ಥನಾಗಿ ನಿಂತು ತನ್ನ ತಂದೆಯನ್ನೇ ನೋಡುತ್ತಾ ನಿಂತ ಕಣ್ಣೀರು ಹರಿಸುತ್ತಾ.