ನೀವು ಪುಸ್ತಕದ ನರಿಗಳೋ?

ಪುಸ್ತಕದ ಹುಳುವಿನ ಬಗ್ಗೆ ಕೇಳಿರಲೇಬೇಕಲ್ಲವೇ ನೀವು? ಏನೇ ಅನ್ನಿ ಅತಿಯಾಗಿ ಓದುವವರನ್ನು, ಪುಸ್ತಕಗಳನ್ನು ಪ್ರೀತಿಸುವವರನ್ನು ಹುಳು ಎಂದು ಮಾತ್ರ ಜರೆಯಬಾರದಿತ್ತು ನಮ್ಮ ಹಿರಿಯರು. ‘ದೇಶ ಸುತ್ತು ಇಲ್ಲಾ ಕೋಶ ಓದು’ ಎಂದ ಸಮಾಜವೇ ಈ ಹುಳು ಎನ್ನುವ ಪದವನ್ನು ಓದುಗನಿಗೆ ದಯಪಾಲಿಸಿದ್ದು ಅಚ್ಚರಿಯೇ ಸರಿ. ಜ್ಞಾನಾರ್ಜನೆಯ ಮೊದಲ ಮೆಟ್ಟಿಲೇ ಓದು. ಪವಿತ್ರ ಕುರಾನ್ ಅವತೀರ್ಣವಾಗಿದ್ದು ಈ ಆರಂಭದ ಸಾಲಿನಿಂದ. “ಓದು, ನಿನ್ನನ್ನು ಸೃಷ್ಟಿಸಿದ ಭಗವಂತನ ನಾಮದಿಂದ”. ಓದಿನ ಬಗೆಗಿನ ವರ್ಣನೆ, ಕಲ್ಪನೆಗಳು ಹೀಗಿರುವಾಗ ಹುಳು ನುಸುಳಿದ್ದಾದರೂ ಎಲ್ಲಿಂದ? ಅಥವಾ ಪುಸ್ತಕದ ಹುಳು ಎಂದು ಕರೆಯುವಾಗ ಅದರಲ್ಲಿ ಗೂಢಾರ್ಥವೇನಾದರೂ ಅವಿತಿರಬಹುದೇ? ಏಕೆಂದರೆ ಹಳೇ ತಲೆಮಾರಿನ ತಲೆ ಯೋಚಿಸುವ ರೀತಿಯೇ ಬೇರೆ ನೋಡಿ.

ಎಲ್ಲರಿಗೂ ತಿಳಿದಂತೆ ಕಾಗದದ ಉತ್ಪಾದನೆ ಮರಗಳಿಂದ ತಾನೇ ? ಗೆದ್ದಲಿನಂಥ ಹುಳುವಿನ ಕೆಲಸವೂ ಅದೇ ಅಲ್ಲವೇ? ಒಂದು ಆರೋಗ್ಯವಂತ, ದಷ್ಟ ಪುಷ್ಟ ಮರವನ್ನ ನಿಧಾನವಾಗಿ, ಶ್ರದ್ಧೆಯಿಂದ ಕೊರೆಯುತ್ತಾ ದುರ್ಬಲಗೊಳಿಸಿ ಕೊನೆಗೆ ಅದರ ಅವಸಾನಕ್ಕೆ ಕಾರಣವಾಗುವುದು? ಒಂದು ಮರವನ್ನು ಬಲಿ ಹಾಕಿ ತಾನೇ ನಮ್ಮ ಮಹೋನ್ನತ ನಾಯಕರ ಬಲಿದಾನದ ಬಗ್ಗೆ ನಾವು ಓದೋದು? ಈ ಕಾರಣಕ್ಕಾಗಿರಬಹುದೇ ಪುಸ್ತಕ ಪ್ರೇಮಿಗಳನ್ನು ಪುಸ್ತಕದ ಹುಳು ಎಂದು ನಿಕೃಷ್ಟವಾಗಿ ಕರೆಯುವುದು?

ಪುಸ್ತಕದ ನರಿ. ಪುಸ್ತಕಗಳನ್ನು ನುಂಗುವ, ಅತಿಯಾದ ಕಲ್ಪನಾಮಯಿಯಾಗಿದ್ದು ಮತ್ತು ಅತಿ ಹೆಚ್ಚು ಪುಸ್ತಕದಂಗಡಿಯ ಖರ್ಚುಳ್ಳ ಒಂದು ಪುಟ್ಟ ಸಸ್ತನಿ. ಪುಸ್ತಕದ ನರಿಗಳು ನಾನಾ ತೆರನಾದ ವಾಸಸ್ಥಳಗಳಲ್ಲಿ ಬದುಕುತ್ತವೆ ಮತ್ತು ಓದಲೆಂದು ಅಸಹಜವಾದ ಸ್ಥಳವನ್ನ ಆಯ್ಕೆ ಮಾಡಿಕೊಳ್ಳುತ್ತವೆ. ಅವು ಒಂಟಿಯಾಗಿ ಬೇಟೆ ಯಾಡಲು ಇಷ್ಟಪಡುತ್ತವೆ ಮತ್ತು ತಮ್ಮ ಹಿಂಡಿನೊಂದಿಗೆ ತಮ್ಮ ಬೇಟೆಯ ಬಗ್ಗೆ ಚರ್ಚಿಸುತ್ತವೆ.

ಈ ಮೇಲಿನ ಮಾತುಗಳು ಪುಸ್ತಕಗಳನ್ನು ಪ್ರೀತಿಸುವ ವ್ಯಕ್ತಿಯೊಬ್ಬರ ಬ್ಲಾಗ್ನಿಂದ ಸಿಕ್ಕಿದ್ದು. ಓದುಗನನ್ನು ಹುಳು ವಿನೊಂದಿಗೆ ಹೋಲಿಸದೆ ನರಿಯೊಂದಿಗೆ ಹೋಲಿಸಿಕೊಂಡು ಬರೆದ ಸಾಲುಗಳು. ಪುಸ್ತಕದ ನರಿಗೂ, ನರನಿಗೂ ಎಷ್ಟೊಂದು ಸಾಮ್ಯ ನೋಡಿ.

ಈಗ ಹೇಳಿ ನೀವು ಪುಸ್ತಕದ ಹುಳುವೋ ಅಥವಾ ಪುಸ್ತಕದ ಗುಳ್ಳೆ ನರಿಯೋ ಎಂದು.

ನನ್ನ ಬಗ್ಗೆ ಕೇಳಿದಿರಾದರೆ ನನ್ನ ಪುಸ್ತಕ ಪ್ರೀತಿ ಹೀಗೆ. an ardent book enthusiast. ಪುಸ್ತಕದ ಮೇಲ್ಮೆಯನ್ನು ಅಪ್ಯಾಯಮಾನದಿಂದ ಓರ್ವ ಮಮತಾಮಯಿ ತಂದೆ ತನ್ನ ಮಗನ ತಲೆ ಸವರುವಂತೆ ಸವರಿ, ಪುಸ್ತಕದ ಪುಟಗಳನ್ನು ತಿರುವುತ್ತಾ ಅದರೊಳಗಿನಿಂದ ಬರುವ ನತದೃಷ್ಟ ಮರದ ತೊಗಟೆಯ ಘಮ ಘಮ ವಾಸನೆಯನ್ನು ಆಸ್ವಾದಿಸುತ್ತಾ, ಅಕ್ಷರಗಳ ಜೋಡಣೆ, ಅಲಂಕಾರದ ಚೆಂದಕ್ಕೆ ತಲೆದೂಗುತ್ತಾ, ಮುನ್ನುಡಿ, ಹಿನ್ನುಡಿ ಬರೆದವರ ಬಗ್ಗೆ ಕಲ್ಪಿಸಿಕೊಳ್ಳುತ್ತಾ, ಬರೆದವ ಎಷ್ಟು ಸಂಪಾದಿಸಿರಬಹುದೆಂದು ಲೆಕ್ಕ ಹಾಕುತ್ತಾ, ಕೊನೆಗೆ, ಓರೆಗಣ್ಣಿನಿಂದ ಈ ಪುಸ್ತಕಕ್ಕೆ ಎಷ್ಟಿರಬಹುದು ಎಂದು ಭಯ, ಆಸೆ ಮಿಶ್ರಿತ ಭಾವನೆಗಳಿಂದ ನೋಡುವುದೇ ನನ್ನ ಮಟ್ಟಿಗಿನ ಹುಮ್ಮಸ್ಸು, enthusiasm. ಹಾಗಾಗಿ ನಾನು ಅತ್ತ ಯಕಃಶ್ಚಿತ್ ಹುಳುವೂ ಅಲ್ಲ, ಇತ್ತ scheming ಗುಳ್ಳೆ ನರಿಯೂ ಅಲ್ಲ.

ವ್ರತಾಚರಣೆಯ ಮಾಸ

ರಮದಾನ್, (ರಂಜಾನ್ ಎಂದೂ ಕರೆಯಲ್ಪಡುತ್ತದೆ, ramzan) ಇಸ್ಲಾಮೀ ಪಂಚಾಂಗದ ಒಂಭತ್ತನೆ ತಿಂಗಳು ಮತ್ತು ಇಸ್ಲಾಮಿನ ಐದು ಸ್ಥಂಭಗಳಲ್ಲಿ ಮೂರನೆಯ ಸ್ಥಂಭವಾದ ರಮದಾನ್ ತಿಂಗಳಿನಲ್ಲಿ ಜಗತ್ತಿನ ಮುಸ್ಲಿಮರು ದಿನವಿಡೀ ಉಪವಾಸವಿದ್ದು ವಿಶೇಷ ಆರಾಧನೆಯಲ್ಲೂ, ಪವಿತ್ರ ಕುರಾನ್ ಪಾರಾಯಣದಲ್ಲೂ ತಮ್ಮ ಸಮಯ ಕಳೆಯುತ್ತಾರೆ. ಈ ಕಾರಣಕ್ಕಾಗಿ ಈ ಮಾಸವನ್ನು ದಾನದ, ಧ್ಯಾನದ ಮತ್ತು ಚಿಂತನೆಯ ಮಾಸವೆಂದು ಕರೆಯುತ್ತಾರೆ (month of charity, contemplation, and reflection). ಚಂದ್ರ ದರ್ಶನದೊಂದಿಗೆ ಆರಂಭವಾಗುವ ೩೦ ದಿನಗಳ ಈ ಉಪವಾಸ ವ್ರತ ಮುಸ್ಲಿಮ್ ಜಗತ್ತಿಗೆ ಹೊಸ ಚೈತನ್ಯವನ್ನೂ, ಧಾರ್ಮಿಕತೆಯನ್ನೂ ತುಂಬುತ್ತದೆ.

ನಮ್ಮನ್ನು ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸುವುದಕ್ಕೆ, ಪ್ರಾಮುಖ್ಯತೆ ಹೆಚ್ಚು. ಯಾವುದೇ ಪರಿಸ್ಥಿತಿಯಲ್ಲೂ ಐದು ಹೊತ್ತಿನ ನಮಾಜನ್ನು ನಿರ್ವಹಿಸಲೇಬೇಕು. ನಮಾಜ್ ಜೊತೆಗೆ ಕುರಾನ್ ಸೂಕ್ತಗಳನ್ನು ಪಠಿಸುವುದು, ಹಜ್ ಯಾತ್ರೆ, ಇವೂ ಸಹ ಆರಾಧನೆಯಲ್ಲೇ ಒಳಗೊಳ್ಳುತ್ತದೆ. ಆದರೆ ನಮಾಜ್, ಕುರಾನ್ ಪಠಣ, ಹಜ್ ಇತ್ಯಾದಿಗಳು  ತೋರಿಕೆಯ ಆರಾಧನೆಯಾಗಿಯೂ ಮಾರ್ಪಡಬಹುದು. ನಾನು ಧರ್ಮಿಷ್ಠ ಎಂದು ತೋರಿಸಲು ಎಲ್ಲರಿಗೂ ಕಾಣುವಂತೆ ಮಸ್ಜಿದ್ ಗೆ ಹೋಗುವುದು, ಹಜ್ ಯಾತ್ರೆ ಮಾಡುವುದು ಹೀಗೆ. ಆದರೆ ವ್ರತಾಚಾರಣೆ ಹಾಗಲ್ಲ. ಇದೊಂದು ರಹಸ್ಯ ಆರಾಧನೆ. ಉಪವಾಸವಿರುವವನ ಮತ್ತು ಅವನ ಪ್ರಭುವಿಗೆ ಮಾತ್ರ ತಿಳಿಯುವ ಆರಾಧನೆ. ಮೂರನೆಯ ವ್ಯಕ್ತಿಗೆ ಇದರ ಅರಿವಿರುವುದಿಲ್ಲ; ಹಾಗಾಗಿ ವ್ರತಾಚರಣೆಗೆ ಹೆಚ್ಚು ಮಹತ್ವ.    

ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದವರೆಗೆ ಉಪವಾಸದ ಅವಧಿ. ಅರುಣೋದಯದ “ಪ್ರಾರ್ಥನೆಯ ಕರೆ” ( “ಅದಾನ್” ) ಕಿವಿಗೆ ಬಿದ್ದ ಕೂಡಲೇ ಆಹಾರ, ಪಾನೀಯಗಳು ನಿಷಿದ್ಧವಾಗುತ್ತವೆ. ಅದೇ ರೀತಿ ಸೂರ್ಯಾಸ್ತದ ಪ್ರಾರ್ಥನೆಯ ಕರೆ ಕೇಳಿದ ಕೂಡಲೇ ಸ್ವಲ್ಪ ನೀರು ಮತ್ತು ಖರ್ಜೂರದ ಸಹಾಯದಿಂದ ಉಪವಾಸವನ್ನು ಕೊನೆಗೊಳಿಸಲಾಗುತ್ತದೆ. ಇಡೀ ದಿನದ ಉಪವಾಸದಿಂದ ಶರೀರದ ಮೇಲೆ ಹೆಚ್ಚು ವ್ಯತಿರಿಕ್ತ ಪರಿಣಾಮ ಆಗಬಾರದು ಎಂದು ಮಧ್ಯ ರಾತ್ರಿಯ ನಂತರ ಅಥವಾ ಅರುಣೋದಯದ ಸ್ವಲ್ಪ ಮೊದಲು ಸ್ವಲ್ಪವಾದರೂ ಆಹಾರ (ಇದಕ್ಕೆ “ಸುಹೂರ್” ಎಂದು ಕರೆಯುತ್ತಾರೆ) ತೆಗೆದು ಕೊಳ್ಳಲೇಬೇಕು. ಅದೇ ರೀತಿ ದಿನವಿಡೀ ಒಂದು ತೊಟ್ಟೂ ನೀರಿಲ್ಲದೆ, ತಮ್ಮ ದಿನಚರಿಗೆ ಯಾವುದೇ ಧಕ್ಕೆ ಬಾರದಂತೆ ತಮ್ಮ ಕೆಲಸ, ಧಂಧೆ ಮಾಡುತ್ತಾ ಉಪವಾಸವಿದ್ದು ಸೂರ್ಯಾಸ್ತಕ್ಕೆ ಒಂದು ಗುಟುಕು ನೀರು ಮತ್ತು ಒಂದು ತುಂಡು ಖರ್ಜೂರದ ಸಹಾಯದಿಂದ ಉಪವಾಸ ಕೊನೆಗೊಳಿಸುವುದಕ್ಕೆ  “ಇಫ್ತಾರ್” ಎಂದು ಕರೆಯುತ್ತಾರೆ. ಇಫ್ತಾರ್ ಪದವನ್ನು ತಾವು ಕೇಳಿರಲೇಬೇಕು, ನಮ್ಮ ರಾಜಕಾರಣಿಗಳು ಮುಸ್ಲಿಂ ಗೆಳೆಯರಿಗೆ ಏರ್ಪಡಿಸುವ ಔತಣ. ಪ್ರಾಯಕ್ಕೆ ಬಂದ ಪ್ರತೀ ಮುಸ್ಲಿಮ್ ಉಪವಾಸ ವ್ರತ ಆಚರಿಸಲೇಬೇಕು ಎಂದು ಕಡ್ಡಾಯವಾದ ನಿಯಮ. ಖಾಯಿಲೆಯಿಂದ ಬಳಲುವವರಿಗೆ ಮತ್ತು ಯಾತ್ರಿಗಳಿಗೆ ಇದರಿಂದ ವಿನಾಯಿತಿ ಇದ್ದು ಯಾತ್ರೆ ಮುಗಿದ ನಂತರ, ಮತ್ತು ಖಾಯಿಲೆಯಿಂದ ಗುಣಮಮುಖರಾದ ನಂತರ ತಪ್ಪಿಹೋದ ಉಪವಾಸ ದಿನಗಳನ್ನು ಉಪವಾಸ ಇರುವ ಮೂಲಕ ತೀರಿಸಬೇಕು,ಅದೂ ಸಾಧ್ಯವಾಗದಿದ್ದರೆ ತಪ್ಪಿ ಹೋದ ದಿನಗಳಿಗೆ ಪ್ರಾಯಶ್ಚಿತ್ತವಾಗಿ ಬಡ ಬಗ್ಗರಿಗೆ ಅನ್ನದಾನ ಮಾಡಬೇಕು.

ರಮದಾನ್ ಮಾಸದ ಮಹತ್ವದ ಬಗ್ಗೆ ಹೇಳುತ್ತಾ ಪ್ರವಾದಿಗಳು ಹೇಳಿದ್ದು, ರಮದಾನ್ ಮಾಸ ೭೦,೦೦೦ ತಿಂಗಳು ಗಳಿಗೆ ಸಮಾನ ಎಂದು. ಅದೂ ಅಲ್ಲದೆ ಇದೇ ತಿಂಗಳಿನಲ್ಲಿ ಪವಿತ್ರ ಕುರಾನ್ ನ ಸೂಕ್ತಗಳು ಅವತೀರ್ಣವಾಗಿದ್ದು.  ಈ ಕಾರಣಕ್ಕಾಗಿ ಜಗದಾದ್ಯಂತ ಮುಸ್ಲಿಮರು ಈ ತಿಂಗಳ ತಮ್ಮ ಬಿಡುವಿನ ವೇಳೆಯಲ್ಲಿ ಮತ್ತು ಹೆಚ್ಚು ಸಮಯ ಕುರಾನ್ ಪಾರಾಯಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಹಾಗೆಯೆ ಈ ತಿಂಗಳಿನಲ್ಲಿ ರಾತ್ರಿಯಲ್ಲಿ “ತರಾವೀಹ್” ಎಂದು ಕರೆಯಲ್ಪಡುವ ವಿಶೇಷ ಪ್ರಾರ್ಥನೆಗಳು ಸಹ ನಡೆಯುತ್ತವೆ. ಪ್ರತೀ ಆರಾಧನೆ, ದಾನ, ಒಳ್ಳೆಯ ಮಾತು, ಕೃತಿ ಇವುಗಳಿಗೆ ಪ್ರತಿಫಲ ಸಹ ೭೦,೦೦೦ ಪ್ರತಿಫಲದ ರೀತಿಯಲ್ಲಿ ದೇವರು ಕೊಡುವನೆಂದೂ ಮುಸ್ಲಿಮ್ ವಿಧ್ವಾಂಸರು ಹೇಳುತ್ತಾರೆ.      

ರಮದಾನ್ ತಿಂಗಳಿನಲ್ಲಿ ನಾವು ಮಾಡುವ ಪ್ರತೀ ಕೆಲಸವೂ ಇಸ್ಲಾಮೀ ಆದರ್ಶಗಳಿಗೆ ಪೂರಕವಾಗಿರಬೇಕೆಂದು ವಿಧ್ವಾಂಸರುಗಳು ಎಚ್ಚರಿಸುತ್ತಾರೆ. ಈ ಮಾಸದಲ್ಲಿ ಉದ್ರೇಕ ಪಡುವುದಾಗಲೀ,ಕೆರಳುವುದಾಗಲೀ ಮಾಡಬಾರದು. ಹಾಗೇನಾದರೂ ಯಾರಾದರೂ ಉದ್ರೇಕಿಸಿದರೆ “ನಾನು ವ್ರತಾಚರಣೆ ಮಾಡುತ್ತಿದ್ದೇನೆ” ಎಂದು ಹೇಳಿ ಮೌನವಾಗಿರಬೇಕು ಎಂದು ಸಲಹೆ ನೀಡುತ್ತಾರೆ. ಜ್ಞಾನಾರ್ಜನೆ, ಮತ್ತು ಸಂಯಮ ಪಾಲನೆ ರಮದಾನ್ ತಿಂಗಳ ವೈಶಿಷ್ಟ್ಯ ಎನ್ನಬಹುದು. ವ್ರತಾಚರಣೆಯ ಮೂಲಕ ರಮದಾನ್ ತಿಂಗಳು ನಮಗೆ “ಸ್ವ ನಿಗ್ರಹ” ದ ಗುಣವನ್ನೂ, ಸಂಯಮ ಶೀಲತೆಯನ್ನೂ ಕಲಿಸುತ್ತದೆ. ಈ ತೆರನಾದ ನಡವಳಿಕೆ ಮುಸ್ಲಿಮರು ಬರೀ ರಮದಾನ್ ಮಾಸಕ್ಕೆ ಸೀಮಿತಗೊಳಿಸದೆ ತಮ್ಮ ಬದುಕಿನ ಪ್ರತೀ ಘಳಿಗೆಯಲ್ಲೂ ಪಾಲಿಸಿದರೆ ದೇವರು ಯಶಸ್ಸನ್ನು ದಯಪಾಲಿಸುತ್ತಾನೆ ಸಮಾಜಕ್ಕೆ ಆದರ್ಶಪ್ರಾಯನಾಗಿ ಬದುಕುತ್ತಾನೆ.  

ಪ್ರತೀ ಮುಸ್ಲಿಂ ಮನೆಯಲ್ಲೂ ರಮದಾನ್ ಒಂದು ವಿಶೇಷ ತಿಂಗಳಾಗಿರುತ್ತದೆ. ಅದರಲ್ಲೂ ಮಕ್ಕಳಿಗೆ ಒಂದು ರೀತಿಯ ಸಂತಸ. ಐದು ವರ್ಷದ ಮೇಲ್ಪಟ್ಟ ಮಕ್ಕಳೂ ಸಹ ಪೂರ್ತಿ ತಿಂಗಳಲ್ಲದಿದ್ದರೂ ಸಾಧ್ಯವಾದಷ್ಟು ದಿಂದ ಉಪವಾಸ ಆಚರಿಸಲು ಯತ್ನಿಸುತ್ತಾರೆ. ನನ್ನ ಆರು ವರ್ಷದ ಮಗ ಕಳೆದ ಎರಡು ವರ್ಷಗಳಿಂದ ೮ – ೧೦ ದಿನ ಉಪವಾಸವಿದ್ದನು. ಸಂಜೆಯಾಗುತ್ತಿದ್ದಂತೆ ಮಕ್ಕಳು ಕಾತುರದಿಂದ ಮಸ್ಜಿದ್ ಗಳ ಗೋಪುರಗಳು ಹೊರಡಿಸುವ ಅದಾನ್ ಗಾಗಿ ಕಾದು ನಿಂತು “ಅಲಾಹು ಅಕ್ಬರ್” (ದೇವರು ಸರ್ವಶ್ರೇಷ್ಠ ) ಎನ್ನುವುದನ್ನು ಕೇಳುತ್ತಲೇ ಓಡಿ ಬಂದು ಅಮ್ಮಾ, ಅಪ್ಪಾ, ಅದಾನ್ ಆಗುತ್ತಿದೆ, ಬೇಗ ನೀರು ಕುಡಿಯಿರಿ ಎಂದು ಉತ್ತೇಜಿಸುತ್ತಾರೆ.

೩೦ ದಿನಗಳ ಉಪವಾಸ ಮುಗಿದ ನಂತರ ಚಂದ್ರ ದರ್ಶನ ವಾಗುತ್ತಲೇ “ಈದ್” ಸಂಭ್ರಮ ಎಲ್ಲೆಡೆ. ಚಂದ್ರ ದರ್ಶನ ಆಗುತ್ತಲೇ ಮಾರನೆ ದಿನದ ಈದ್ ನಂದು ಯಾರೂ ತಿನ್ನಲು ಇಲ್ಲದೆ ಬಳಲಬಾರದು ಎಂದು ಬಡಬಗ್ಗರಿಗೆ ಅಕ್ಕಿ ದಾನ ಮಾಡುತ್ತಾರೆ. ಈ ದಾನದಿಂದಾಗಿಯೇ ಈದ್ ಹಬ್ಬಕ್ಕೆ “ಈದ್ ಅಲ್ ಫಿತ್ರ್” ಎಂದು ಹೆಸರು.         

ಸೌದಿ ಅರೇಬಿಯಾದಲ್ಲಿ ರಮದಾನ್ ತುಂಬಾ ಸೊಗಸು. ಇಡೀ ತಿಂಗಳು ಮತ್ತು ಅದರ ನಂತರ ಬರುವ ಸುಮಾರು ಹತ್ತು ದಿನಗಳ ಈದ್ ಸಂಭ್ರಮ. ಇಡೀ ನಗರವೇ ಅಲಂಕಾರದಲ್ಲಿ ಮುಳುಗಿರುತ್ತದೆ. ಎಲ್ಲೆಲ್ಲೂ ವಿಶೇಷ offer ಗಳು, ಬಹುಮಾನಗಳು, ರಸ್ತೆ ಬದಿಯಲ್ಲಿ ಉಪವಾಸವಿಟ್ಟುಕೊಂಡು ಪ್ರಯಾಣ ಮಾಡುವವರಿಗೆ ಪುಕ್ಕಟೆ ತಿಂಡಿ ತೀರ್ಥಗಳ ವಿತರಣೆ, ನಿರ್ಗತಿಕರಿಗೆ, ಕೆಳಸ್ತರದ ಉದ್ಯೋಗ ಮಾಡುವವರಿಗೆ ದಾನ ಮಾಡುವಲ್ಲಿ ಪೈಪೋಟಿ, ಹೀಗೆ ನಾನಾ ರೀತಿಯ ಚಟುವಟಿಕೆಗಳನ್ನು ಕಾಣಬಹುದು. ಕೆಲಸದ ಸಮಯವೂ ನಾಲ್ಕು ಅಥವಾ ಐದು ಘಂಟೆಗಳು. ಹಾಗಾಗಿ ಉಪವಾಸವಿರುವುದು ಬಹಳ ಸುಲಭ ಅರೇಬಿಯಾದಲ್ಲಿ.