ಈಗ ಅತ್ಯಾಚಾರ ‘ಕಾಮನ್ ಫೆನಾಮೆನಾ’ ನಮ್ಮ ದೇಶದಲ್ಲಿ

ಈಗ ಅತ್ಯಾಚಾರ ಕಾಮನ್ ಫೆನಾಮೆನಾ ನಮ್ಮ ದೇಶದಲ್ಲಿ. ಟೈಮ್ಸ್ ಆಫ್ ಇಂಡಿಯಾ ದ ಆನ್ ಲೈನ್ ಆವೃತ್ತಿಯ ಮಧ್ಯ ಭಾಗದ ಸುದ್ದಿ ಯಲ್ಲಿ ದಿನವೂ ರಾರಾಜಿಸುವ ಚಟುವಟಿಕೆ ಈ ರೇಪು ಎನ್ನುವ ಅಸಹ್ಯ ಹುಟ್ಟಿಸುವ perversion. ಇದಕ್ಕೆ ಮುಖ್ಯ ಕಾರಣ ಎಂದರೆ ರೇಪಿಗೆ ತಕ್ಕ ಶಿಕ್ಷೆಯ ಕೊರತೆ ಅದರೊಂದಿಗೇ ಈ ನೀಚ ಕೃತ್ಯಕ್ಕೆ ಮಹಿಳೆಯನ್ನು ಹೊಣೆಯಾಗಿಸುವ  ನಾಚಿಕೆಗೆಟ್ಟ ವರ್ತನೆ. ಮಹಿಳೆ ಸರಿಯಾಗಿ ಬಟ್ಟೆ ಉಡಲು ಅಸಮರ್ಥಳಾದರೆ ರೇಪ್ ಬಂದು ಎರಗುತ್ತದೆ ಎನ್ನುವುದು ಬಹಳಷ್ಟು ಜನರ ವಕ್ರ ನ್ಯಾಯ. ವಯಸ್ಕ, ಹದಿಹರೆಯದ ಹೆಣ್ಣಿನ ಉಡುಗೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡುವುದಾದರೆ ಒಂದೂವರೆ, ಎರಡು, ಮೂರು ವರ್ಷದ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರಕ್ಕೆ ಏನು ಸಮಜಾಯಿಷಿ?

ಇಂದು ೧೧ ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಕೊಲ್ಲಲಾಯಿತು. ಈ ಅಮಾನುಷ ಕೃತ್ಯಗಳು ನಾಗರೀಕ ಸಮಾಜದ ಕಣ್ಣು ತೆರೆಸಲು ವಿಫಲ ವಾಗುತ್ತಿರುವುದು ದಿಗಿಲನ್ನು ಹುಟ್ಟಿಸುತ್ತಿದೆ. ನನ್ನ ಪ್ರಕಾರ ಅತ್ಯಾಚಾರ ಭ್ರಷ್ಟಾಚಾರಕ್ಕಿಂತ ಕೀಳು, ಅಸಹ್ಯ. ಅತ್ಯಾಚಾರದ ವಿರುದ್ಧ ಅಣ್ಣಾ ಹಜಾರೆ, ಕೇಜರಿವಾಲ (ನಾನು ಈತನ ಫ್ಯಾನ್ ಅಲ್ಲ) ನಂಥವರು ಧ್ವನಿ ಎತ್ತುತ್ತಿಲ್ಲ?

ಅತ್ಯಾಚಾರಕ್ಕೆ ಮಹಿಳೆಯ ಉಡುಗೆ ಕಾರಣ ಎಂದು ಬರೀ ಜನ ಸಾಮಾನ್ಯನ ಅಭಿಪ್ರಾಯ ಮಾತ್ರವಲ್ಲ ಮಂತ್ರಿ ಮಹೋದಯರೂ, ಪೊಲೀಸ್ ಅಧಿಕಾರಿಗಳೂ ಈ ಮಾತಿಗೆ ಧ್ವನಿಗೂಡಿಸುತ್ತಾರೆ.  ಈಗ ಹರಿಯಾಣ ರಾಜ್ಯದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲ ಕೊಡುವ ಸಲಹೆ ಏನೆಂದರೆ ಹೆಣ್ಣು ಗಂಡುಗಳ ವಿವಾಹಾರ್ಹ ವಯಸ್ಸನ್ನು ಇಳಿಸಬೇಕು ಎನ್ನುವುದು. ಒಂದು ಕಡೆ ಸರಿಯಾಗಿ ಬಟ್ಟೆ ತೊಡು ಇಲ್ಲಾ ಮಾನ ಕಳೆದು ಕೊಳ್ಳಲು ತಯಾರಾಗು ಎನ್ನುವ ಎಚ್ಚರಿಕೆಗೆ ಮದುವೆ ವಯಸ್ಸನು ಇಳಿತ ಮಾಡಿದರೆ ರೇಪ್ ದರದಲ್ಲಿ ಕಡಿತ ಬರಬಹುದು ಎನ್ನುವ ವಾದಕ್ಕೆ ಜೋಡಿ ಎನ್ನುವಂತೆ ಬರುತ್ತಿದೆ ಮಂತ್ರಿಯ ಸಲಹೆ. ಈ ಮಾತಿನೊಂದಿಗೆ ಈ ಮು. ಮಂತ್ರಿ ಮುಘಲರನ್ನೂ ಎಳೆದು ತರುತ್ತಾನೆ. ಕುಣಿಯಲು ಬಾರದವಳು ನೆಲ ಡೊಂಕು ಎಂದಳಂತೆ, ಆಳನು ಬಾರದವನು ಮುಘಲರನ್ನು, ಪೋರ್ಚುಗೀಸರನ್ನು ಹೊನೆಯಾಗಿಸುತ್ತಾನೆ ತನ್ನ ಹೊಣೆಗೇಡಿತನಕ್ಕೆ.

ಒಟ್ಟಿನಲ್ಲಿ ಸಮಾಜದ ನಿಲುವು ಇಷ್ಟೇ. ಏನೇ ಆಗಲಿ, ಏನೇ ಬರಲಿ, ನಾವು ಮಾತ್ರ ನಮ್ಮ ಗಂಡು ಮಕ್ಕಳಿಗೆ ನೈತಿಕತೆಯ ಪಾಠ ಹೇಳೋಲ್ಲ, ಪರ ಹೆಣ್ಣನ್ನು ಗೌರವದಿಂದ ಕಾಣಲು ಉತ್ತೇ ಜಿಸೋಲ್ಲ ಎನ್ನುವ ಹೊಟ್ಟೆ ತೊಳೆಸುವಂಥ ಮೊಂಡುತನ. ನಮ್ಮ ಸಂಸ್ಕಾರ ಅಂಥದ್ದು, ಇಂಥದ್ದು ಎಂದು vainglorious ಆಗಿ ಕಣ್ಣು ಮುಚ್ಚಿ, ಎದೆಯುಬ್ಬಿಸಿ ನಡೆದರೆ ಸಾಲದು. ಅತ್ಯಾಚಾರದಂಥ ಅವಮಾನಕಾರೀ ಸಾಮಾಜಿಕ ಪಿಡುಗಿಗೆ ಇತಿಶ್ರೀ ಹಾಡಲೇ ಬೇಕು.              

ಕನಿಷ್ಠ ಉಡುಗೆ, ಗರಿಷ್ಠ ಅಪಾಯ

ನಮ್ಮ ದೇಶದಲ್ಲಿ ಅತ್ಯಾಚಾರ ಹೆಚ್ಚುತ್ತಿರುವುದಕ್ಕೆ ಕಾರಣ ಮಹಿಳೆಯರು ಪ್ರಚೋದನಕಾರಿ ಉಡುಗೆ ತೊಡುತ್ತಿರುವುದು ಎಂದು ಆಂಧ್ರ ಪ್ರದೇಶದ ಪೊಲೀಸ್ ಮುಖ್ಯಸ್ಥ ದಿನೇಶ್ ರೆಡ್ಡಿ ಹೇಳಿಕೆ ನೀಡುವುದರ ಮೂಲಕ ಜೇನುಗೂಡಿಗೆ ಕಲ್ಲು ಬೀಸಿದ್ದಾರೆ. ಈ ಮಾತಿಗೆ ವಿರೋಧ ವ್ಯಕ್ತಪಡಿಸಿದರು ನಮ್ಮ ಸನ್ಮಾನ್ಯ ಗೃಹ ಮಂತ್ರಿಗಳು. ಈ ಹೇಳಿಕೆ ಸರಿಯಲ್ಲ, ಕಾಕ್ಟೇಲ್ ಪಾರ್ಟಿ ಗೆ ಹೋಗುವ ಮಹಿಳೆ ಬಿಕಿನಿಯಲ್ಲಿ ಹೋಗಲಾರಳು, ಸಂದರ್ಭಕ್ಕೆ ಅನುಸಾರವಾಗಿ ಆಕೆ ಬಟ್ಟೆ ತೊಡುವಳು ಎಂದು ಬಡಬಡಿಸಿದರು.

ಗೃಹ ಮಂತ್ರಿಗಳಿಗಿಂತ ಚೆನ್ನಾಗಿ ಸಮಾಜ ಕಾಯುವ ಪೊಲೀಸರಿಗೆ ತಾನೇ ಗೊತ್ತಿರೋದು ಸಮಾಜದ ಆಗುಹೋಗುಗಳು? ಕನಿಷ್ಠ ಬಟ್ಟೆ ತೊಟ್ಟ ಹುಡುಗಿ ಅಥವಾ ಮಹಿಳೆ ಯಾವುದೇ ಕಾರಣದಿಂದಲೂ ಒಳ್ಳೆಯ ಭಾವನೆ ತರಲಾರರು. ನಮ್ಮಲ್ಲಿ ಬರುವ ವಿದೇಶೀ ಮಹಿಳೆಯರನ್ನು ಗಂಡಸರು ನೋಡುವ ರೀತಿ ನೀವು ಗಮನಿಸಿರಲೇಬೇಕಲ್ಲ, ಅದಕ್ಕೆ ಕಾರಣ ಏನು, ಆಕೆಯ ಅಂಗ ಸೌಷ್ಠವದ ಪ್ರದರ್ಶನ. ಮೈ ಪ್ರದರ್ಶನ ನಡೆಸೋ ಮಹಿಳೆಯರು loose character ನವರು ಎಂದು ಬಹಳ ಜನ ತಪ್ಪಾಗಿ ತಿಳಿಯುತ್ತಾರೆ. ನಮಗೇಕೆ ವಿದೇಶೀ  ಜನರ ಉಡುಗೆ ತೊಡುಗೆ ಮೇಲೆ ವ್ಯಾಮೋಹ? ಅವರು ಕನಿಷ್ಠ ಉಡುಗೆ ತೊದಲು ಕಾರಣ ಯಾವಾಗಲೂ ಗಡಿ ಬಿಡಿ ಯಾಗಿರುವ ಅವರ ಚಟುವಟಿಕೆ ಯಾಗಿರಬಹುದು. ನಮ್ಮ ಮಹಿಳೆಯರ ಥರ ಉದ್ದದ ಕೂದಲನ್ನೂ ಸಹ ಬೆಳೆಸೋಲ್ಲ ಅವರು. ಸ್ನಾನದ ನಂತರ ಒಣಗಲು ನಂತರ  ಬಾಚಲು ಸಿಗದ ಸಮಯದ ಕಾರಣ. ಮಹಿಳೆಯರು ಅಂತರಂಗದ ಸೌಂದರ್ಯಕ್ಕೆ  ಪ್ರಾಶಸ್ತ್ಯ ಕೊಟ್ಟರಾಗದೆ? ಈ ವರದಿ ಆಂಗ್ಲ ಪತ್ರಿಕೆಯಲ್ಲಿ ಬಂದಿದ್ದೆ ತಡ, ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂತು. ಬಹುತೇಕ ಓದುಗರು ದಿನೇಶ್ ರೆಡ್ಡಿಯವರ ಮಾತಿಗೆ ಸಹಮತ ವ್ಯಕಪಡಿಸಿದರು. ದಿನೇಶ ರೆಡ್ಡಿಯವರ ಪ್ರಕಾರ ಗ್ರಾಮಾಂತರ ಪ್ರದೇಶಗಳಿಗೂ ಅಂಟಿಕೊಂಡಿದೆ ಈ ಪಿಡುಗು. ಪೊಲೀಸ್ ಮುಖ್ಯಸ್ಥರ ಹೇಳಿಕೆಗೆ ಮಹಿಳಾ ಸಂಘಟನೆಗಳು ರೆಡ್ಡಿಯವರನ್ನು chauvinist ಎಂದು ಮೂದಲಿಸಿದವು.

ನಮ್ಮ ಸಂಸ್ಕೃತಿ ಪಾಶ್ಚಾತ್ಯರಿಗಿಂತ ವಿಭಿನ್ನ, ಹಾಗೆಯೇ ಅಂಥಾ ಮಾಡರ್ನ್ ಸಂಸ್ಕಾರಕ್ಕೆ ನಮ್ಮ ಸಮಾಜ ಇನ್ನೂ ತಯಾರಾಗಿಲ್ಲ, ತಯಾರಾಗುವವರೆಗೆ ನಮ್ಮ ಸಂಸ್ಕೃತಿಗೆ ತಕ್ಕುದಾದ ಉಡುಗೆ ಧರಿಸುವುದು ಒಳಿತು.

ನಾ ಕಂಡುಕೊಂಡ ಇಸ್ಲಾಂ

ಇಸ್ಲಾಂ ಧರ್ಮದ ಬಗೆಗಿನ ಸಂಶಯ, ಅಪನಂಬಿಕೆಗಳು, ತಾರಕಕ್ಕೇರಿದ್ದು ನಮ್ಮೆಲ್ಲರ ಮಧ್ಯೆ ಇರುವ, ನಾವು ದಿನವೂ ಕಾಣುವ ಇಸ್ಲಾಮಿನ ಆಚಾರ ವಿಚಾರಗಳು ಇದ್ದಕ್ಕಿದ್ದಂತೆ ಅಪರಿಚಿತವಾಗಿ ಇದೀಗ ತಾನೇ ಭೂಲೋಕಕ್ಕೆ ಅವತರಿಸಿದ ಅನರ್ಥದಂತೆ ಚಿತ್ರಿಸಲಾಗುತ್ತಿದೆ ಮುಸ್ಲಿಮರನ್ನು ಮತ್ತು ಅವರು ನಂಬಿಕೊಂಡು ಬಂದ ಧರ್ಮವನ್ನು. ಸೆಪ್ಟಂಬರ್ ೧೧, ೨೦೦೧ ರಲ್ಲಿ ಅಮೆರಿಕೆಯ ಗಗನಚುಂಬಿ ಕಟ್ಟಡಗಳನ್ನು ೧೯ ಜನ ಅರಬ್ ಮೂಲದ ಯುವಕರು ಕದ್ದೊಯ್ದ ವಿಮಾನಗಳನ್ನು ಕ್ಷಿಪಣಿಗಳಂತೆ ಉಪಯೋಗಿಸಿ ನೆಲಸಮಗೊಳಿಸಿದ್ದು, ಸಾವಿರಾರು ಜನರ ಸಾವು ನೋವುಗಳಿಗೆ ಕಾರಣವಾಗಿದ್ದು ಇಸ್ಲಾಮಿನ ಬಗ್ಗೆ ಭಯ ಜನರ ಮನಸ್ಸಿನಲ್ಲಿ ಬೇರೂರಲು ಸಹಾಯಮಾಡಿತು. ತಮ್ಮ ಸ್ವಾರ್ಥ, ಕ್ಷುಲ್ಲಕ, “ಅಡಗಿರಿಸಿದ ಕಾರ್ಯತಂತ್ರ” ಸಾಧಿಸುವ ನಿಟ್ಟಿನಲ್ಲಿ ಇಸ್ಲಾಂ ವಿರೋಧಿಗಳು ಮಾಧ್ಯಮಗಳ ಸಹಾಯದಿಂದ ಈ ಭಯ ಜನರ ಮನಸ್ಸಿನಲ್ಲಿ ಮತ್ತಷ್ಟು ಬೇರೂರಿಸಿ ಒಬ್ಬ ಮುಸ್ಲಿಮನ ದರ್ಶನವಾದರೂ ಮುಗಿಬೀಳುವಂತೆ ಅಥವಾ ವಿಷ ಜಂತುವನ್ನು  ಕಂಡಂತೆ ಆಡಲು ಕಾರಣಕರ್ತರಾದರು.

ಇಷ್ಟೊಂದು ನಿರ್ಭೀತಿಯಿಂದ, ಅಸಾಧಾರಣ ದೈರ್ಯದಿಂದ, ಸ್ವಂತ ಜೀವವನ್ನೂ ಲೆಕ್ಕಿಸದೆ ಆಕ್ರಮಣ ಮಾಡಿದವರ  ideology ಯಾವುದು, ಅದರ ಉದ್ದೇಶವೇನು ಹೀಗೆ ಕುತೂಹಲ ಮುಗಿಲು ಮುಟ್ಟಿ ಇಸ್ಲಾಮಿನ ಬಗ್ಗೆ ಅಲ್ಪ ಸ್ವಲ್ಪ ಜ್ಞಾನವಿದ್ದವರೆಲ್ಲಾ ಏಕಾಏಕಿ ಇಸ್ಲಾಮಿನ ಪಂಡಿತರಾಗಿ ಪುಸ್ತಕಗಳನ್ನೂ, ಲೇಖನಗಳನ್ನೂ ಬರೆದರು. ತನಗೆ ಅರ್ಥವಾಗದ ಖಾಯಿಲೆ ತಗುಲಿ ಕೊಂಡಾಗ ಖೊಟ್ಟಿ ವೈದ್ಯರ ಮೊರೆ ಹೋಗುವ ವ್ಯಕ್ತಿಯ ಹಾಗೆ ಜನರು ಅರೆ ಬುದ್ಧಿವಂತ ಪಂಡಿತರ ಮೊರೆ ಹೋದರು ಇಸ್ಲಾಮನ್ನು ಅರಿಯಲು. ಆದರೆ ಅವರಿಗೇ ಸಿಕ್ಕಿದ್ದು ಅರೆಬೆಂದ, ಕಪೋಲಕಲ್ಪಿತ ವಿಚಾರಗಳು. ಈ ಬೆಳವಣಿಗೆ ಪಾಶ್ಚಾತ್ಯ ದೇಶಗಳಿಗೆ ಮಾತ್ರ ಸೀಮಿತವಾಗಲಿಲ್ಲ. ಸಾಗರ ದಾಟಿ ನಮ್ಮ ತೀರಕ್ಕೂ ಬಂದವು ಸಂಶಯಗಳು, ಕಪೋಲಕಲ್ಪಿತ ವಿಚಾರಗಳು. ೮೦೦ ವರ್ಷಗಳಿಗೂ ಮಿಕ್ಕು ಆಳಿದ ಒಂದು ಸಂಸ್ಕೃತಿ, ತಮ್ಮ ಭಾಷೆ, ಉಡುಗೆ, ತೊಡುಗೆ, ವಾಸ್ತು ಶಿಲ್ಪಿ, ಸಂಗೀತ ಹೀಗೆ ಬದುಕಿನ ಸಂಸ್ಕೃತಿಯ ಎಲ್ಲಾ ಮಜಲುಗಳಲ್ಲಿ ತನ್ನದೇ ಆದ, ಎಂದಿಗೂ ಅಳಿಸಲಾಗದ, ಛಾಪನ್ನು ಒತ್ತಿದ ಧರ್ಮವನ್ನು ಮತ್ತೊಮ್ಮೆ ನಾಡಿನವರಿಗೆ ಪರಿಚಯಮಾಡಿ ಕೊಡಬೇಕಾದ ಅವಶ್ಯಕತೆ ಬಗ್ಗೆ  ದುಃಖ ತೋರಿದರೂ ನಾನು ನಂಬಿದ ಮತ್ತು ೧೬ ಕೋಟಿಗೂ ಮಿಕ್ಕು ಭಾರತೀಯರು ಕೊಂಡಾಡುವ ಒಂದು ಸಂಸ್ಕೃತಿಯ ಬಗ್ಗೆ ಬರೆಯೋಣ ಎನ್ನಿಸಿತು. ಭಾರತವನು ಆಳಿದ ಮುಸ್ಲಿಮ ಅರಸರು, ಚಕ್ರವರ್ತಿಗಳು ಆಳಬೇಕಾದ ರೀತಿಯಲ್ಲಿ ಆಳಿದ್ದರೆ ಈ ಲೇಖನ ಬರೆಯುವ ಅವಶ್ಯಕತೆ ಇರುತ್ತಿರಲಿಲ್ಲವೇನೋ. ನಾನು ಇಸ್ಲಾಂ ಪಂಡಿತನಲ್ಲ. ನನ್ನ ದೈನಂದಿನ ಬದುಕಿನ ಇಸ್ಲಾಮನ್ನು ನಿಮಗೆ ಪರಿಚಯ ಮಾಡಿಸುವತ್ತ ನನ್ನ ಪ್ರಯತ್ನ ಮಾಡುತ್ತೇನೆ. ಸಂದು ಹೋದ ಕಾಲದ, ವೈಭವದ ಬಗ್ಗೆ ಪ್ರಲಾಪಿಸದೆ, ಹಲುಬದೆ, ನನ್ನ ಸಂಸ್ಕೃತಿ ಮಾತ್ರ ಮೇಲು ಎನ್ನುವ ಉಡಾಫೆತನ ತೋರಿಸದೆ, ನಿಮ್ಮ ಮುಂದೆ ಇಟ್ಟಿದ್ದೇನೆ ನಾನು ನಂಬಿದ ನಂಬಿಕೆ, ಧರ್ಮ, ಮತ್ತು ಜೀವನ ರೀತಿಯ ಒಂದು ತುಣುಕನ್ನು.   

ಇಸ್ಲಾಂ ಅಂದರೇನು:  ಇಸ್ಲಾಂ ಅಂದರೆ ಶರಣಾಗುವುದು, ನಿರಾಕಾರನಾದ ಪ್ರಭುವಿನ ಆಜ್ಞೆಗಳಿಗೆ ಶರಣಾಗುವುದು ಎಂದು. ಸಲಾಂ ಎಂದರೆ ಶಾಂತಿ ಎನ್ನುವ ಪದದ ಮೂಲವೂ ಇದೇ ಆದ್ದರಿಂದ ಇಸ್ಲಾಂ ಶಾಂತಿಯ ಧರ್ಮವೂ ಹೌದು. ಆದರೆ characteristically ಇಸ್ಲಾಮನ್ನು ಶಾಂತಿಯ ಧರ್ಮ ಮಾತ್ರ ಎಂದು ವಿವರಿಸಲಾಗದು. ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸಬೇಕೆನ್ನುವ ಅಸ್ವಾಭಾವಿಕ impractical ನಡವಳಿಕೆಗೆ ಇಸ್ಲಾಂ ಒಪ್ಪದೇ ಸಾಮಾಜಿಕ ನ್ಯಾಯಕ್ಕಾಗಿ, ಮನುಷ್ಯನ ಸ್ವಾಭಾವಿಕ ಆತ್ಮ ಗೌರವಕ್ಕಾಗಿ, ಕುಟುಂಬ,ಜೀವ, ಸೊತ್ತುಗಳ ರಕ್ಷಣೆಗಾಗಿ ಸಿದ್ಧರಾಗಲು ಕರೆ ನೀಡುತ್ತದೆ. ಆದರೆ ಯಾವುದೇ ರೀತಿಯ ಹೋರಾಟವೂ ದೇವಾಜ್ಞೆಗಳ ಚೌಕಟ್ಟಿನಲ್ಲಿ, ನ್ಯಾಯ ಸಮ್ಮತ ರೀತಿಯಲ್ಲಿ ನಡೆಯಬೇಕೆನ್ನುವ ಇಸ್ಲಾಂ ಅದೇ ಉಸಿರಿನಲ್ಲಿ ಎದುರಾಳಿಯನ್ನು ಕ್ಷಮಿಸಿ, ಹೃದಯ ವೈಶಾಲ್ಯತೆ ತೋರಿ ದೈವಸಂಪ್ರೀತಿಗಳಿಸಿಕೊಳ್ಳಲು ಕರೆ ನೀಡುತ್ತದೆ ತನ್ನ ಅನುಯಾಯಿಗಳಿಗೆ.  

ಇಸ್ಲಾಮಿನ ಮೂಲಭೂತ ನಂಬಿಕೆ ಮತ್ತು ಅಡಿಗಲ್ಲೆಂದರೆ ಏಕದೇವೋಪಾಸನೆ. ಈ ವಿಷಯದ ಬಗ್ಗೆ ಇಸ್ಲಾಂ ನ ನಿಲುವು uncompromising. ಏಕದೇವೋಪಾಸನೆಯ ಈ ವೈಶಿಷ್ಟ್ಯ ಕ್ರೈಸ್ತ ಧರ್ಮಕ್ಕೆ ಸೇರಿದ ಇಸ್ಲಾಂ ಟೀಕಾಕಾರರ ಮತ್ತು ಹಿಂದೂ ಧಾರ್ಮಿಕ ಗುರುಗಳ ಮೆಚ್ಚುಗೆಯನ್ನೂ ಗಳಿಸಿತು. ಈ ನಿಲುವನ್ನು ಯಾವುದೇ ಕಾರಣಕ್ಕೂ ಸಡಿಲಿಸದೆ ಇದ್ದ ಕಾರಣ ಪ್ರವಾದಿಗಳು ತಮ್ಮ ಹುಟ್ಟೂರಾದ ಮಕ್ಕಾ ಪಟ್ಟಣದಿಂದ ಹೊರಗಟ್ಟಲ್ಪಟ್ಟರು.

“ಕಾಬಾ” ಇರುವುದು ಮಕ್ಕಾ ನಗರದಲ್ಲಿ. ಚೌಕಾಕಾರದ, ಕಪ್ಪು ವಸ್ತ್ರದಿಂದ ಹೊದೆಯಲ್ಪಟ್ಟ ಈ ಕಟ್ಟಡದ ಸುತ್ತಾ ಆಗಿನ ಕಾಲದ ಮಕ್ಕಾ ಮತ್ತು ಅರೇಬಿಯಾದ ನಿವಾಸಿಗಳು ಪ್ರದಕ್ಷಣೆ ಹಾಕುತ್ತಿದ್ದರು. ೩೬೦ ಕ್ಕೂ ಹೆಚ್ಚು ವಿಗ್ರಹಗಳಿದ್ದ ಈ ಭವನಕ್ಕೆ ಸ್ತ್ರೀಯರು ನಗ್ನರಾಗಿ ಪ್ರದಕ್ಷಿಣೆ ಮಾಡುತ್ತಿದ್ದರು. ಸಾಮಾಜಿಕವಾಗಿ ಅಲ್ಲಿನ ಜನರು ಕುಡಿತ, ಜೂಜು, ಪರಸ್ತ್ರೀ ಸಂಗ, ಬಡ್ಡಿ ವ್ಯವಾಹಾರ, ವ್ಯಾಪಾರದಲ್ಲಿ ಮೋಸ, ತೂಕದಲ್ಲಿ ಮೋಸ, ಕಾಳ ಧಂಧೆ, ಹುಟ್ಟಿದ ಮಗು ಹೆಣ್ಣಾದರೆ ಜೀವಂತವಾಗಿ ಹೂಳುವುದು ಹೀಗೆ ನೂರಾರು ಅನಿಷ್ಟಗಳಿಂದ ತಮ್ಮ ಜೀವನ ಶೈಲಿಯನ್ನಾಗಿ ಮಾಡಿ ಕೊಂಡಿದ್ದರು. ಈ ದುರ್ವರ್ತನೆಗಳು ಕೂಡದು, ನಮ್ಮ ಪ್ರತೀ ಕ್ರಿಯೆಗಳು ದೇವನನ್ನು ಸಾಕ್ಷಿಯನ್ನಾಗಿ ಇಟ್ಟುಕೊಂಡು, ಅವನ ಸಂಪ್ರೀತಿಗಾಗಿ ನಮ್ಮ ಬದುಕನ್ನು ಮುಡಿಪಿಡಬೇಕು ಎಂದ ಪ್ರವಾದಿಗಳ ಮಾತು ಅಲ್ಲಿನ ಜನರಿಗೆ ಹಿಡಿಸಲಿಲ್ಲ. ನಮ್ಮ ಆರಾಧನಾ ಕ್ರಮಗಳು ಮತ್ತು ಜೀವನ ರೀತಿಯನ್ನು ವಿರೋಧಿಸದೆ ಇದ್ದರೆ ನಿನ್ನ ಕಾಲಿನ ಬುಡಕ್ಕೆ ನಮ್ಮ ಸಂಪತ್ತನ್ನೆಲ್ಲಾ ಸುರಿಯುತ್ತೇವೆ, ನಿನ್ನನ್ನು ನಮ್ಮ ನಾಯಕನನ್ನಾಗಿ ಮಾಡುತ್ತೇವೆ, ರಾಜನನ್ನಾಗಿ ಅಂಗೀಕರಿಸುತ್ತೇವೆ ಎಂದು ಆಮಿಷ ತೋರಿಸಿದ ಬುಡಕಟ್ಟಿನ ಜನರ ಮಾತಿಗೆ ಒಪ್ಪದೇ ಆರಾಧನೆ ಸೃಷ್ಟಿ ಕರ್ತನಿಗೆ ಮಾತ್ರ, ನಮ್ಮ ಕೈಯ್ಯಾರೆ ಸೃಷ್ಟಿಸಿದ ಸೃಷ್ಟಿಗಳಿಗಲ್ಲ ಎಂದು ಸೊಲ್ಪವೂ ವಿಚಲಿತರಾಗದೆ ಧೃಢ ಸ್ವರದಲ್ಲಿ ಪ್ರವಾದಿಗಳು ಹೇಳಿದಾಗ ಅವರನ್ನು ಮಕ್ಕಾ ನಗರದಿಂದ ಹೊರಗಟ್ಟಿದರು ಅಲ್ಲಿನ ನಿವಾಸಿಗಳು.  ಪ್ರವಾದಿಗಳು ತಮ್ಮ ಅನುಚರರೊಂದಿಗೆ ಭಾರವಾದ ಹೃದಯದಿಂದ ತಮ್ಮ ಪ್ರೀತಿಯ ಮಕ್ಕಾ ಪಟ್ಟಣ ಬಿಟ್ಟು ಮದೀನಾ ನಗರಕ್ಕೆ ಬಂದರು. ಇದನ್ನು “ಹಿಜರಿ” ಎಂದು ಕರೆಯುತ್ತಾರೆ. ಹಿಜರಿ ಎಂದರೆ ವಲಸೆ ಎಂದರ್ಥ. ಏಕದೇವೋಪಾಸನೆಯ ವಿಷಯದಲ್ಲಿ ಮಕ್ಕಾ ಜನರೊಂದಿಗೆ ರಾಜಿ ಮಾಡಿ ಕೊಂಡಿದ್ದರೆ ಪ್ರವಾದಿಗಳು ಕಷ್ಟ ಕಾರ್ಪಣ್ಯ, ಸಾಮಾಜಿಕ ಬಹಿಷ್ಕಾರಗಳನ್ನು ಎದುರಿಸ ಬೇಕಿರಲಿಲ್ಲ. ಪ್ರವಾದಿಗಳ ಈ ನಿಲುವು ಅವರಿಗೆ ಹೊಸ ಬೆಂಬಲಿಗರನ್ನು ಗಳಿಸಿ ಕೊಟ್ಟಿತು.  

ಮಾನವರೆಲ್ಲಾ ಸಮಾನರು, “ಸನ್ನಡತೆಯ ಗಂಡು” ಮತ್ತು “ಸನ್ನಡತೆಯ ಹೆಣ್ಣು” ಇವೆರಡೇ ಜಾತಿಗಳು ಎಂದು ಸಾರಿದ ಪ್ರವಾದಿಗಳಿಗೆ ಮದೀನಾ ನಗರದಲ್ಲಿ ಅಭೂತಪೂರ್ವವಾದ ಸ್ವಾಗತ ಸಿಕ್ಕಿತು. ಕಡು ಕಪ್ಪ್ಪು ತ್ವಚೆಯ ಗುಲಾಮರು ಸಮಾಜದ ಕುಲೀನ ವರ್ಗದವರೊಂದಿಗೆ ಬೆರೆತು ಸರಿ ಸಮಾನರಾಗಿ ಬಾಳುತ್ತಿದ್ದರು. ನಮಾಜಿನ ಸಮಯ ನೀಡುವ ಕರೆ “ಅದಾನ್” ಪ್ರಪ್ರಥಮವಾಗಿ ಕಾಬಾ ಭವನದ ಮೇಲೆ ನಿಂತು ನೀಡಿದ್ದು ಇಥಿಯೋಪಿಯಾ ದೇಶದ ಗುಲಾಮ “ಬಿಲಾಲ್”. ಈ ಸಮಾನತೆಯ ಮೋಹಕ ಆದರ್ಶ ವಿಶ್ವದಾದ್ಯಂತ ದಂಡು ದಂಡಾಗಿ ಜನ ಇಸ್ಲಾಮಿಗೆ ಶರಣಾಗುವಂತೆ ಮಾಡಿತು.         

ಆರಾಧನೆ:  ದಿನದಲ್ಲಿ ಐದು ಹೊತ್ತು ಯಾವುದೇ ಸಮಜಾಯಿಷಿ ಇಲ್ಲದೆ ನಮಾಜ್ ನಿರ್ವಹಿಸುವುದು ಇಸ್ಲಾಮಿನ ಮತ್ತೊಂದು ಅಡಿಗಲ್ಲು. ಹೆಣ್ಣಿಗೆ ಶಾರೀರಿಕ ತೊಡಕು ಹೊರತು ಪಡಿಸಿ, ಮತ್ತು ಗಂಡು ತನ್ನ ಕೊನೆಯುಸಿರಿರುವವರೆಗೂ ನಮಾಜನ್ನು ನಿರ್ವಹಿಸಲೇಬೇಕು. ಪ್ರಯಾಣದಲ್ಲೂ, ಶಾರೀರಿಕ ಅಸ್ವಸ್ಥ ಸ್ಥಿತಿಯಲ್ಲೂ, ರಣರಂಗದಲ್ಲೂ, ಯಾವುದೇ ವಿನಾಯಿತಿ ಇಲ್ಲದೆ ಕ್ಲಪ್ತ ಸಮಯಕ್ಕೆ ಸೃಷ್ಟಿ ಕರ್ತನ ಆರಾಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಅರುಣೋದಯ ದ ಪ್ರಾರ್ಥನೆ, ಸೂರ್ಯ ನೆತ್ತಿಗೆ ಬಂದಾಗಿನ ಹೊತ್ತು, ಅಪರಾಹ್ನ, ಸಂಜೆ, ಮತ್ತು ರಾತ್ರಿ ಇವು ನಮಾಜ್ ಗೆಂದು ನಿಯುಕ್ತ ಗೊಂಡ ಸಮಯಗಳು. ಸಮಯ ತಪ್ಪಿಸಿದರೆ ಆ ಆರಾಧನೆ  ಚಲಾವಣೆ ಕಳೆದು ಕೊಂಡ ಕಾಸಿನಂತೆ. ನಿರರ್ಥಕ. ಸಮಯ ತಪ್ಪಿಸಿದ ಆರಾಧನೆ ನನಗೆ ಬೇಡ ಎನ್ನುತ್ತಾನೆ ಪರಮಾತ್ಮ. ಈ ನಿಯಮದಲ್ಲಿ ಬದುಕಿನಲ್ಲಿ ಯಶಸ್ಸಿಗೊಂದು ಪಾಠ ಇಲ್ಲಿದೆ ನೋಡಿ. ನಮಾಜ್ ಸಮಯಪ್ರಜ್ಞೆಯನ್ನು ಜನರಲ್ಲಿ ಬೆಳೆಸುತ್ತದೆ, ಸಮಯದ ಮಹತ್ವದ ಬಗ್ಗೆ ನಿಷ್ಠುರತೆ ತೋರಿಸುತ್ತದೆ. ಆದರೆ ಈ ಸಾರವನ್ನು ಮುಸ್ಲಿಮ್ ಜನಾಂಗ ಅರಿಯದೆ ಇರುವುದು ಖೇದಕರ.

ಇಸ್ಲಾಮಿನಲ್ಲಿ ಸ್ತ್ರೀ:  ಮನೋಹರವಾದ, ವಿಶ್ವ ಕೊಂಡಾಡಿದ ಆದರ್ಶಗಳಾದ ಏಕ ದೇವೋಪಾಸನೆ, ಮನುಷ್ಯರಲ್ಲಿ ಸಮಾನತೆ, ಯಾವುದೇ ಪರಿಸ್ಥಿತಿಯಲ್ಲೂ ದೇವರ ಆರಾಧನೆಯಂಥ ವಿಚಾರಗಳು ಮಾತ್ರವಲ್ಲ ಹೆಣ್ಣಿನ ಸ್ವಾತಂತ್ರ್ಯದ ಕಡೆಗೂ ಇಸ್ಲಾಂ ಗಮನ ಹರಿಸಿತು. ಆಗಿನ ಕಾಲದಲ್ಲಿ ಹೆಣ್ಣಿಗೆ ಆಸ್ತಿಯಲ್ಲಿ ಹಕ್ಕು ಯಾರೂ ಕೇಳಿರದ, ಕಂಡಿಲ್ಲದ ಒಂದು ಬೆಳವಣಿಗೆ. ಪ್ರಪ್ರಥಮವಾಗಿ ಹೆಣ್ಣಿಗೆ ತನ್ನ ತಂದೆಯ ಆಸ್ತಿಯಲ್ಲಿ ಹಕ್ಕನ್ನು ನೀಡುವ ಮೂಲಕ ಒಂದು ಕ್ರಾಂತಿ ಕಾರೀ ಬೆಳವಣಿಗೆಗೆ ಇಸ್ಲಾಂ ನಾಂದಿ ಹಾಡಿತು. ಇಸ್ಲಾಂ ಅನುಷ್ಠಾನಕ್ಕೆ ತಂದ ೮೦೦  ವರುಷಗಳ ತರುವಾಯ ಇಂಗ್ಲೆಂಡ್ ಈ ಕಾನೂನನ್ನು ಅನುಷ್ಠಾನಕ್ಕೆ ತಂದಿತು. ಹೆಣ್ಣಿಗೆ ಆತ್ಮವಿಲ್ಲ ಮತ್ತು ಸ್ವರ್ಗ ಲೋಕದಿಂದ ಮನುಷ್ಯ ಹೊರ ಹಾಕಲ್ಪಟ್ಟಿದ್ದು ಹೆಣ್ಣಿನ ತಪ್ಪಿನಿಂದ, ಪ್ರಪಂಚದ ಎಲ್ಲಾ ಕೋಲಾಹ, ಕಲಹಗಳಿಗೆ ಹೆಣ್ಣೇ ಕಾರಣ ಎಂದು ಮಹಿಳೆಯನ್ನು ಪಾಶ್ಚಾತ್ಯರಂತೆ ಜರಿಯದೆ ದೇವರಿಗೆ ಭಯ ಪಟ್ಟು ಬದುಕುವ ಗಂಡು ಮತ್ತು ಹೆಣ್ಣು ಹೇಗೆ ಸಮಾನರು ಎಂದು ಕುರಾನಿನ ಸೂಕ್ತದಲ್ಲಿ ವಿವರವಾಗಿ ಹೇಳಲಾಗಿದೆ. ಈಗಿನ ಹೆಣ್ಣಿನ ಶೋಷಣೆಗೆ, ದುರ್ಗತಿಗೆ ಮನುಷ್ಯನ ಅತಿಯಾಸೆ ಮತ್ತು ದಬ್ಬಾಳಿಕೆ ಕಾರಣವೇ ಹೊರತು ಧರ್ಮವಲ್ಲ ಎನ್ನುವುದನ್ನು ಇಸ್ಲಾಮಿನ ಆದರ್ಶಗಳನ್ನು ಅರಿತವರಿಗೆ ಅರಿವಾಗುವುದು.   ವಿಧವೆಯರಿಗೆ ಅವರ ಉಡುಗೆ ತೊಡುಗೆಗಳಲ್ಲಿ ಯಾವುದೇ ನಿರ್ದಿಷ್ಟ ನಿರ್ಬಂಧ ಹೇರದೆ ಅವರ ಮರು ವಿವಾಹಕ್ಕೆ ಅನುವು ಮಾಡಿಕೊಡಲು ಸಮಾಜದಿಂದ ಇಸ್ಲಾಂ ಬಯಸುತ್ತದೆ.

ಸ್ತ್ರೀಯರಿಗೆ ಯಾವುದೇ ಸ್ವಾತಂತ್ರ್ಯವಿಲ್ಲ ಎಂದು ಹೇಳುವ ಟೀಕಾಕಾರರಿಗೆ ಮುಸ್ಲಿಮ್ ಸಮಾಜ ಉತ್ತರ ನೀಡಿದೆ. ವಿಶ್ವದಲ್ಲಿ ಇದುವರೆಗೂ ಐದು (ತುರ್ಕಿ, ಪಾಕಿಸ್ತಾನ, ಬಾಂಗ್ಲ ದೇಶ, ಕಿರ್ಗಿಸ್ತಾನ್) ಮುಸ್ಲಿಂ ಮಹಿಳಾ ಪ್ರಧಾನಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದು ಅವರನ್ನು ಆರಿಸಿದ ಮತದಾರರಲ್ಲಿ ಪುರುಷರೂ ದೊಡ್ಡ ಸಂಖ್ಯೆಯಲ್ಲಿ ಇದ್ದರು ಎನ್ನುವುದನ್ನು ಮನಗಾಣಬೇಕು. ಅಷ್ಟೇ ಅಲ್ಲದೆ ಜೋರ್ಡನ್, ಮತ್ತು ಕತಾರ್ ದೇಶಗಳ ರಾಣಿಯರು ಮತ್ತು ಸಿರಿಯಾ ದೇಶದ ಅಧ್ಯಕ್ಷರ ಪತ್ನಿ ಆ ದೇಶಗಳ ರಾಜಕಾರಣಗಳಲ್ಲಿ ಸಕ್ರಿಯವಾಗಿ ಬಾಗವಹಿಸುತ್ತಿರುವರು. ಪಾಕಿಸ್ತಾನದಲ್ಲಿ ಮೊಟ್ಟ ಮೊದಲ  ಮಹಿಳಾ ಬ್ಯಾಂಕನ್ನು ಸಂಸ್ಥಾಪನೆ ಮಾಡಿದ್ದು ಓರ್ವ ಮಹಿಳೆ.  

ಬಹು ಪತ್ನಿತ್ವ:  ಕೆಲವೊಂದು ಸನ್ನಿವೇಶಗಳಲ್ಲಿ, ಕಟ್ಟುನಿಟ್ಟಾದ ಷರತ್ತುಗಳೊಂದಿಗೆ ಪುರುಷ ಬಹು ಪತ್ನಿತ್ವ ಪಾಲಿಸಬಹುದು. ಆದರೆ ಪತ್ನಿಯರ ನಡುವೆ ನ್ಯಾಯ ಪಾಲಿಸುವಂತೆ ಇಸ್ಲಾಂ ಕಠಿಣ ಶರತ್ತುಗಳನ್ನು ಒಡ್ಡಿದ್ದರಿಂದ ಬಹುಸಂಖ್ಯಾತ ಮುಸ್ಲಿಮರು ಏಕ ಪತ್ನೀವ್ರತಸ್ಥರಾಗಿದ್ದಾರೆ ಎಂದು ನಾವು ಕಾಣಬಹುದು. ಈ ತೆರನಾದ ಒಂದಕ್ಕಿಂತ ಹೆಚ್ಚು ಹೆಂಡಿರನ್ನು ಹೊಂದುವ ಸೌಲಭ್ಯವಿದ್ದರೂ ವಿಶ್ವದ ಶೇಕಡಾ ೯೫ ಕ್ಕೂ ಅಧಿಕ ಮುಸ್ಲಿಂ ಪುರುಷರು ಓರ್ವ ಪತ್ನಿಯಿಂದಲೇ ಸಂತೃಪ್ತರಾಗಬೇಕಾದರೆ ಮುಸ್ಲಿಮರಲ್ಲಿರುವ ಆಳವಾದ ಧಾರ್ಮಿಕ ಪ್ರಜ್ಞೆ ಮತ್ತು ದೈವ ಭಯ ಇರುವುದರಿಂದಲೇ ಸಾಧ್ಯ ಎಂದು ಮನಗಾಣಬಹುದು.  

ಮುಸ್ಲಿಮೇತರರೊಂದಿಗೆ ಇಸ್ಲಾಂ:  ಸಂಪೂರ್ಣ ಅರೇಬಿಯಾ ತನ್ನ ಉನ್ನತ ಆದರ್ಶಗಳಿಗೆ ತಲೆ ಬಾಗಿ ನಡೆಯುತ್ತಿದ್ದರೂ ಪ್ರವಾದಿಗಳು ಯಹೂದ್ಯರೊಂದಿಗೆ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದರು.

ಪ್ರವಾದಿಗಳ ನಂತರ ಖಲೀಫಾ ಆಳ್ವಿಕೆಯ ಪರಂಪರೆ ಆರಂಭವಾಯಿತು. ಪ್ರವಾದಿಗಳ ನಂತರದ ಸುಮಾರು ೫೦೦ -೬೦೦ ವರ್ಷಗಳನ್ನು ಇಸ್ಲಾಮಿನ ಸುವರ್ಣ ಯುಗ ಎಂದು ಇತಿಹಾಸಕಾರರು ಬಣ್ಣಿಸುತ್ತಾರೆ.

ಮುಸ್ಲಿಂ ಆಳ್ವಿಕೆಯಲ್ಲಿ ಮುಸ್ಲಿಮೇತರರ ಮೇಲೆ “ಜೆಜಿಯಾ” ತಲೆಗಂದಾಯ ವಿಧಿಸಿದ ಕಾರಣ ನೋಡೋಣ. ಎಲ್ಲಾ ಮುಸ್ಲಿಂ ರಾಜರುಗಳು ಈ ಪದ್ಧತಿಯನ್ನು ಅನುಸರಿಸಲಿಲ್ಲ. ಮುಸ್ಲಿಂ ಆಳ್ವಿಕೆಯಲ್ಲಿ, ಮುಸ್ಲಿಂ ದೇಶದಲ್ಲಿ ನೆಲೆಸುವ ಮುಸ್ಲಿಮೇತರರಿಗೆ ಕೆಲವು ಸೌಲಭ್ಯ ಕೊಡುವ ಕಾರಣ ಈ ತೆರಿಗೆ ವಿಧಿಸಲಾಯಿತು. ಮುಸ್ಲಿಮೇತರರು ಸೈನ್ಯದಲ್ಲಿ ಭಾಗವಹಿಸುವ ಅವಶ್ಯಕತೆಯಿಲ್ಲ, ಮತ್ತು ಪ್ರತೀ ಮುಸ್ಲಿಮನೂ ಪಾವತಿಸಲೇ ಬೇಕಾದ “zakah” ಎನ್ನುವ ತೆರಿಗೆಯಿಂದಲೂ ಮುಸ್ಲಿಮೇತರರಿಗೆ ವಿನಾಯಿತಿ ನೀಡಲಾಯಿತು. ಹಾಗೆಯೇ ಅವರ ಪ್ರಾಣ, ಆಸ್ತಿ ರಕ್ಷಣೆ ಸಹ ಮುಸ್ಲಿಂ ದೇಶದ ಹೊಣೆಯಾಗಿತ್ತು.  

ಯಾವ ಧರ್ಮಕ್ಕೆ ಸೇರಿದವನಾದರೂ ನೆರೆ ಹೊರೆಯವನೊಂದಿಗೆ ಸ್ನೇಹದಿಂದ  ಇರಲೂ, ನೆರೆಯವನ ಎಲ್ಲಾ ಅವಶ್ಯಕತೆ ಪೂರೈಸಲು ಮುಸ್ಲಿಮರನ್ನು ಇಸ್ಲಾಂ ಉತ್ತೇಜಿಸುತ್ತದೆ. ಇಸ್ಲಾಮಿನ ಎರಡನೇ ಖಲೀಫಾ (ಧರ್ಮಾಧಿಕಾರಿ, ಇಸ್ಲಾಮಿನಲ್ಲಿ “ರಾಜ” ಎನ್ನುವ ಪದ್ಧತಿಯಿಲ್ಲ, ಅದು ನವೀನ ಅವಿಷ್ಕಾರ) ಉಮರ್ ಅವರ ಕಾಲದಲ್ಲಿ ಒಬ್ಬ ಯಹೂದ್ಯ ವ್ಯಕ್ತಿ ತನ್ನ ಮನೆ ಪಕ್ಕದ ಖಾಲಿ ಜಾಗವನ್ನ ಮಾರುವಾಗ ದೊಡ್ಡ ಮೊತ್ತದ ಹಣ ಕೇಳುತ್ತಾನೆ. ಕಾರಣ ಕೇಳಿದಾಗ ಖಾಲಿ ಜಾಗದ ಪಕ್ಕದಲ್ಲಿ ಧರ್ಮ ನಿಷ್ಠ ಮುಸ್ಲಿಂ ವ್ಯಕ್ತಿ ವಾಸವಿರುವುದರಿಂದ ಆ ವ್ಯಕ್ತಿಯಿಂದ ಯಾವುದೇ ತಕರಾರು, ಸಮಸ್ಯೆಗಳು ಬರಲು ಸಾಧ್ಯವಿಲ್ಲದೆ ಇರುವುದರಿಂದ ಆ ಖಾಲಿ ಸ್ಥಳಕ್ಕೆ ಹೆಚ್ಚು ಹಣ ಎಂದು ವಿವರಣೆ ನೀಡುವ ಯಹೂದಿ ಪರೋಕ್ಷವಾಗಿ ಇಸ್ಲಾಮಿನ ಆದರ್ಶಗಳನ್ನು ಕೊಂಡಾಡುತ್ತಾನೆ.  

ಕೊನೆಯದಾಗಿ ಇಸ್ಲಾಮಿನ ಹೆಸರಿನಲ್ಲಿ ಹಿಂಸೆ, ರಕ್ತ ಪಾತ ಹರಿಸುತ್ತಿರುವವರು ತಾವು ನಂಬಿದ ಧರ್ಮದ ಆದರ್ಶಗಳಿಗೆ ದ್ರೋಹ ಬಗೆಯುತ್ತಿದ್ದು ಅವರ ಕುಕೃತ್ಯಗಳಿಗೆ ಇಸ್ಲಾಂನ  ಮೇಲೆ ಹೊಣೆ ಹೊರಿಸುವುದು ತಪ್ಪು.  ವಿನಾಕಾರಣ ಯಾವುದೇ ನಿರಪರಾಧಿ, ಮುಗ್ಧ ವ್ಯಕ್ತಿಯನ್ನು ಕೊಂದರೆ ಇಡೀ ಮಾನವಕುಲವನ್ನೇ ಕೊಂದಂತೆ ಎಂದು ಸಾರುವ ಇಸ್ಲಾಂ ಒಬ್ಬ ವ್ಯಕ್ತಿಯ ಜೀವ ಉಳಿಸಿದರೂ ಜೀವ ಉಳಿಸಿದ ವ್ಯಕ್ತಿ ಮಾನವ ಕುಲವನ್ನೇ ಉಳಿಸಿದ ಕೀರ್ತಿಗೆ ಪಾತ್ರನಾಗುತ್ತಾನೆ ಎಂದು ಹೇಳಿದ್ದರೆ ಭಯೋತ್ಪಾದನೆಯ ಬಗೆಗಿನ ಇಸ್ಲಾಮ್ ನ ನಿಲುವು ಏನು ಎಂದು ತಿಳಿಯುತ್ತದೆ.  ರಾಜಕೀಯ ಕಾರಣಗಳಿಗಾಗಿ ಹಿಂಸೆಯ ಮಾರ್ಗ ಹಿಡಿರುವ ದುರುಳರಿಗೆ ಅವರು ಮಾಡುತ್ತಿರುವುದು “ಪ್ರತಿಕ್ರಿಯಾತ್ಮಕ” ಹಿಂಸೆ ಎಂತಲೋ, “ಧರ್ಮಕ್ಕಾಗಿ ಕಯ್ಯೆತ್ತುವುದು” ಎಂತಲೂ ಮುಸ್ಲಿಮರು ಸಮರ್ಥಿಸದೆ ಒಕ್ಕೊರಲಿನಿಂದ ಖಂಡಿಸಿದ್ದಾರೆ. ರಕ್ತಪಾತ, ಸಾಮೂಹಿಕ ಕೊಲೆಯಂಥ ಕೃತ್ಯ ಎಸಗುವ ಜನರು ಇಸ್ಲಾಂ ಧರ್ಮಕ್ಕೆ ಸೇರಿದವರಲ್ಲ ಎಂದು ಕಳೆದವರ್ಷ ಹೈದರಾಬಾದಿನಲ್ಲಿ ಸೇರಿದ್ದ ದೇಶದ ಮುಸ್ಲಿಂ ಪಂಡಿತರುಗಳು ಇಸ್ಲಾಂ ವಿಶ್ವ ಶಾಂತಿ ಬಯಸುತ್ತದೆ ಎಂದು ಸಾರಿದ್ದರು.

ಮುಸ್ಲಿಮರಲ್ಲಿರುವ ಅನಕ್ಷರತೆ, ಮತ್ತಿತರ ನ್ಯೂನತೆಗಳಿಗೆ ಮುಸ್ಲಿಮರು ಹೊಣೆಯೇ ಹೊರತು ಅವರು ನಂಬುವ ಇಸ್ಲಾಂ ಧರ್ಮವಲ್ಲ. ಪವಿತ್ರ ಗ್ರಂಥ ಕುರಾನ್ ನ ಮೊದಲ ಸೂಕ್ತಗಳು ಆರಂಭಗೊಂಡಿದ್ದು ಈ ವಾಕ್ಯದಿಂದ; “ಓದು, ನಿನ್ನನ್ನು ಸೃಷ್ಟಿಸಿದ ಪ್ರಭುವಿನ ನಾಮದಿಂದ” ಎಂದು. ಇಸ್ಲಾಂ ಜ್ಞಾನಕ್ಕೆ ಎಷ್ಟು ಮಹತ್ವ ನೀಡಿದೆ ಎಂದು ಈ ಸೂಕ್ತದಿಂದ ತಿಳಿಯಬಹುದು. ಇಸ್ಲಾಂ ಧರ್ಮವನ್ನ ಅರಿಯಬೇಕೆಂದರೆ ನೇರವಾಗಿ ಧರ್ಮಗ್ರಂಥಗಳನ್ನು ಓದಿ ಅರ್ಥ ಮಾಡಿಕೊಳ್ಳಬೇಕೆ ವಿನಃ  ಮುಸ್ಲಿಮರ ನಡವಳಿಕೆ ನೋಡಿ ಇವರ ಧರ್ಮ ಹೀಗೆ ಎಂದು ತೀರ್ಪು ನೀಡುವುದು ತಪ್ಪು.      

ಪ್ರವಾದಿಗಳ ಬಗ್ಗೆ ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ರಾಮಕೃಷ್ಣ ರಾವ್ ಸುಂದರವಾದ ಪುಸ್ತಿಕೆ ಬರೆದಿದ್ದಾರೆ. ಆಂಗ್ಲ ಭಾಷೆಯಲ್ಲಿ ಇರುವ ಆ ಪುಸ್ತಿಕೆ ಸೌದಿ ಅರೇಬಿಯಾದ ಮಸೀದಿಗಳಲ್ಲೂ ಕಾಣಬಹುದು. ಪುಸ್ತಿಕೆಯ ಹೆಸರು Muhammad, the prophet of Islam.

ಮದುವೆಯ ಈ ಬಂಧಾ…..

ವಿವಾಹದ ದಿನ ಎಂದರೆ ಪ್ರತಿ ಹೆಣ್ಣು ಗಂಡಿನ ಬದುಕಿನ ಅತ್ಯಂತ ಮಹತ್ತರವಾದ, ಎಂದೆಂದೂ ನೆನಪಿನಲ್ಲುಳಿಯುವ ದಿನ. ರೋಮಾಂಚನ, ದುಗುಡ, ಕಾತುರ, ಸಂತಸ, ಹೆಮ್ಮೆ ಹೀಗೆ ನೂರೊಂದು ಭಾವನೆಗಳು ವಿವಾಹದಂದು. ಆ ವಿಶೇಷ ದಿನಕ್ಕಾಗಿಯೇ ವಧೂ ವರರು ತಿಂಗಳುಗಟ್ಟಲೆ ತಯಾರಿ ನಡೆಸಿರುತ್ತಾರೆ. ವರ ಅಷ್ಟೊಂದು ತಲೆ ಕೆಡಿಸಿಕೊಳ್ಳದಿದ್ದರೂ ವಧುವಿಗಂತೂ ತನ್ನ ವಿವಾಹದ ದಿನ ಹೀಗೆಯೇ ಇರಬೇಕೆನ್ನುವ ಸ್ಪಷ್ಟ ಕಲ್ಪನೆ ಇರುತ್ತದೆ.

ನಮ್ಮ ದೇಶದಲ್ಲಿ ಯಾವ ಧರ್ಮೀಯರೇ ಆಗಲಿ ವಿವಾಹದ ದಿನ ತಮ್ಮ ಸಂಸ್ಕೃತಿಯನ್ನು ಬಿಂಬಿಸುವ ಉಡುಗೆ ತೊಡುಗೆ ಇಷ್ಟಪಟ್ಟರೆ ಪಾಶ್ಚಾತ್ಯರದು ಬೇರೆಯೇ ಆದ ದೃಷ್ಟಿಕೋನ. ಉಡುಗೆ ಮಾತ್ರವಲ್ಲ ಮದುವೆ ಆಗುವ ಸ್ಥಳಗಳೂ ಸಹ ವಿಚಿತ್ರವೇ. ಕೆಲವರು ನೀರಿನೊಳಕ್ಕೆ ಇಳಿದು ವಿವಾಹಿತರಾದರೆ ಇನ್ನೂ ಕೆಲವರು ಪ್ಯಾರಾಶೂಟ್ ನಲ್ಲಿ ಕೂತು ಮದುವೆ ಆಗುತ್ತಾರೆ.

ಹೀಗೆ ವಿವಿಧ ರೀತಿಯಲ್ಲಿ ಜನರ ಗಮನವನ್ನ ಸೆಳೆಯುವ ಉದ್ದೇಶದೊಂದಿಗೆ ವಿಶಿಷ್ಟ ವಾದ ರೀತಿಯಲ್ಲಿ ಮದುವೆಯಾಗುತ್ತಾರೆ.  ಕೆಲವು ಉಡುಗೆಗಳ ದೃಶ್ಯಗಳಿವೆ ಪಾಶ್ಚಾತ್ಯರದು. ನೋಡಿ ಆನಂದಿಸಿ.

 

ಮೇಲಿನ ಬಲ ಬದಿಯ ಎರಡು ಚಿತ್ರಗಳನ್ನೂ ನೋಡಿ ಮೂರ್ಛೆ ಹೋಗಿಲ್ಲ ತಾನೇ? ಹೋದರೂ ಅಚ್ಚರಿಯಿಲ್ಲ. ಸತ್ತ ಹೆಣವೂ ಶವ ಪೆಟ್ಟಿಗೆಯೊಳಕ್ಕೆ ಮಲಗಲು ಹೆದರುತ್ತದೆ, ಆದರೆ ಈ ಲಲನಾಮಣಿ ವಧು ಆರಿಸಿಕೊಂಡ ಜಾಗ ಶವಪೆಟ್ಟಿಗೆ. ಅವಳ ಗುಂಡಿಗೆಗೆ ಕೊಡಬೇಕು ನೋಡಿ ಬಹುಮಾನ. ತಾನು ಪ್ರೀತಿಸಿದ ವನನ್ನು ವಿವಾಹವಾಗಲು ೨೭ ವರ್ಷ ತಗುಲಿತಂತೆ. ಅಷ್ಟರಲ್ಲಿ ಇಬ್ಬರಿಗೂ ಬೇರೆಯವರೊಂದಿಗೆ ಮದುವೆಯಾಗಿ ಮಕ್ಕಲ್ಲೂ ಇದ್ದವು. ಕೊನೆಗೆ ಈ ಪ್ರೇಮಿಗಳು ಮದುವೆಯಾಗುವ ಕಾಲ ಕೂಡಿ ಬಂತು ತಮ್ಮ ತಮ್ಮ ಬಾಳ ಸಂಗಾತಿಗಳು ಬೇರೆಯಾದಾಗ. ಇನ್ನೆಂದೂ ತನ್ನ ಇನಿಯ ತನ್ನಿಂದ ಬೇರೆಯಾಗ ಕೂಡದೆಂದು ಅವನ ಕೊರಳಿಗೆ ನಾಯಿಗೆ ಕಟ್ಟುವ ಪಟ್ಟಿ ಕಟ್ಟಿದ್ದಾಳೆ ಸಹ. ನಮ್ಮಲ್ಲಿ ಹೆಣ್ಣಿಗೆ ತಾಳಿ ಕಟ್ಟುವುದಿಲ್ಲವೆ ಹಾಗೆ.