ರೆಸ್ಟುರಾಂಟ್, ಮಹಿಳೆಯರಿಗೆ ಮಾತ್ರ

“ಮಹಿಳೆಯರಿಗೆ ಮಾತ್ರ” ಕಾಲೇಜುಗಳು, ರೈಲಿನ ಬೋಗಿಗಳು, ಬ್ಯಾಂಕುಗಳು ಇರುವಾಗ ರೆಸ್ಟುರಾಂಟ್ ಗಳೂ ಏಕಿರಬಾರದು? ಗಂಡಸರ, ಬೀಡಿ, ಸಿಗರೇಟ್ ವಾಸನೆ ಇರದ, ಮನೆಯಂತೆಯೇ ಕಾಣುವ ‘ತಿನಿಸು ತಾಣ’ ಗಳು ಮಹಿಳೆಯರಿಗೆ ಖಂಡಿತ ಇಷ್ಟವಾಗುತ್ತವೆ. ಹೆಂಗಳೆಯರೊಂದಿಗೆ ಹರಟೆ, ಚಾಡಿ ಮನಸೋ ಇಚ್ಛೆ ಹೊಡೆಯಲು ಇದಕ್ಕಿಂತ ಪ್ರಶಸ್ತ ಸ್ಥಳ ಬೇರೆ ಇರಲಾರದು. ಇಂಥ ಒಂದು ರೆಸ್ಟುರಾಂಟ್ ನಲ್ಲಿ ಕೆಲಸ ಮಾಡುವ ಪುರುಷ waiter ಗಳ ಸಮವಸ್ತ್ರ ಒಂಚೂರು ನೋಡಿ. ಎಷ್ಟು ಚೆನ್ನಾಗಿದೆ.

 

ಕುರಿಗಳು ಸಾರ್, ಕುರಿಗಳಲ್ಲಾ ಸಾರ್

ಪ್ರಾಣಿಗಳಿಗೆ ಹಿಂಸೆ ಆದಾಗ ಪ್ರಾಣಿ ದಯಾ ಸಂಘಕ್ಕೆ ಕರೆ ಕೊಡೋದು ವಾಡಿಕೆ. ಬಂದ್ ಗಾಗಿ ಕರೆ ಅಲ್ಲ, ಬಂದು ಪ್ರಾಣಿಯನ್ನು ಉಳಿಸಿ ಅಂತ ಹೇಳೋಕೆ ಕರೆ. ಜಟಕಾ ಗಾಡಿಯ ಮಾಲೀಕ ಬಳಲಿದ, ಹಸಿದ, ನಿತ್ರಾಣವಿಲ್ಲದೆ ಒಲ್ಲೆ ಎಂದರೂ ಬಿಡದೆ ಬಾರು ಕೋಲಿನಿಂದ ಬಾರಿಸಿ ತನ್ನ ಗಾಡಿಯಲ್ಲಿರುವ ಪೋಸ್ಟ್ ಮಾರ್ಟಂ ದಾರಿ ಹಿಡಿದ ಹೆಣ ವನ್ನು ಅದು ಸೇರಬೇಕಾದ ಸ್ಥಳ ತಲುಪಿಸಲು ಕುದುರೆಗೆ ಕೊಡುವ ಹಿಂಸೆ ನೋಡಿ, ನೋಡಲಾರದೆ ಪ್ರಾಣಿ ದಯಾ ಸಂಘಕ್ಕೆ ಬುಲಾವ್ ಕೊಡೋದು.  ಹೌದು ಪ್ರಾಣಿಗಳಿಗೆ ದಯೆ ತೋರಿಸಬೇಕಾದ್ದೆ. ಆದರೆ ಈ ಬುಲಾವ್ ಬರೀ ಕುದುರೆ ಕತ್ತೆ ನಾಯಿಗಳಿಗೆ ಮಾತ್ರ ಏಕೆ, ಕೋಳಿ ಕುರಿಗಳಿಗೂ ಏಕಿಲ್ಲ ಅವೂ ಪ್ರಾಣಿಗಳೇ ಅಲ್ಲವೇ ಎಂದು ಕೆಲವರ ಸಂಶಯ. ಒಬ್ಬರ ಸಂಶಯಕ್ಕೆ ಪಾರ್ಶ್ವ ಉತ್ತರವಾಗಿ ಮತೊಬ್ಬರು ಹೇಳಿದರು, ಕುರಿ ಏನೋ ಪ್ರಾಣಿಯೇ, ಆದರೆ ಕೋಳಿ ಪ್ರಾಣಿಯಲ್ಲ, ಅದು ಪಕ್ಷಿ ಎಂದು. ಪ್ರಾಣಿಯೋ , ಪಕ್ಷಿಯೋ ಪ್ರಾಣವಂತೂ ಇದೆಯಲ್ರೀ ಅಂತೀರಾ? ಸೊಳ್ಳೆಗೂ ಇದೆ ಪ್ರಾಣ, ಹಾಗೆಯೇ ತಿಗಣೆಗೂ ಸಹ, ಅಲ್ವರ? ಸೊಳ್ಳೆಯನ್ನು ಕೊಲ್ಲಲು ಈಗ ಚೀನೀ ತಂತ್ರಜ್ಞಾನ ಉಪಯೋಗಿಸುತ್ತಿಲ್ಲವೇ ನಾವು. ಟೆನ್ನಿಸ್ ಬೆಡಗಿ ಸಾನಿಯಾ ಥರ ಎಲೆಕ್ಟ್ರೋನಿಕ್ ಬ್ಯಾಟ್ ಹಿಡಿದು ಚಟ ಚಟ, ಚಟ, ಚಟಾ ಅಂತ ಅಟ್ಟಾಡಿಸಿಕೊಂಡು ಸುಡುತ್ತಿಲ್ಲವೇ ಸೊಳ್ಳೆ ಗಳನ್ನು?  ನಮ್ಮ ಕಿವಿಗಳ ಸುತ್ತಾ ಹಾರುತ್ತಾ, ತಪ್ಪಿಸಿಕೊಳ್ಳುತ್ತಾ, ಒಂದು ರೀತಿಯ ಅಣಕದ ಶಬ್ದ ಮಾಡಿ ನಂತರ ನಮ್ಮ ರಕ್ತ ಹೀರುವ  ಸೊಳ್ಳೆಗಳನ್ನು ಹಾಗೆ ಬಿಡಿ ಅಂತೀರಾ ಎಂದು ಕೇಳಬೇಡಿ. back hand, fore hand, ಹೀಗೆ ನಾನಾ ರೀತಿ ರಾಕೆಟ್ ತಿರುಗಿಸಿ ಫ್ರೈ ಮಾಡಿ ಸೊಳ್ಳೆಗಳನ್ನು.   ಹಾಗಾದರೆ ಈ ಮೇಲಿನ ಪುರಾಣ ಯಾಕೆ? ಕುರಿ, ಕೋಳಿ, ಪ್ರಾಣಿ ದಯೆ, ಬ್ಲಾ, ಬ್ಲಾ, ಬ್ಲಾ ಎಂದಿರಾ?

ಈಗ ಪ್ರಾಣಿ ಹಿಂಸೆ ವಿಷಯ ಬಂದಾಗ ಕೆಲವರು by choice ಅಥವಾ by taste ಕಾರಣ ಆರಿಸಿಕೊಂಡ ಆಹಾರ ಪದ್ಧತಿಗೆ ಕೊನೆ ಹಾಡಿ ಕುರಿ ಕೋಳಿ ಭಕ್ಷ್ಯ ಮಾಡುವ ಪರಿಪಾಠಕ್ಕೆ ನಾಂದಿ ಹಾಡಬೇಕು. ನಮ್ಮ ದೇಶದಲ್ಲಿ ಕುರಿ ಕೋಳಿ ಹಂದಿ ಮುಂತಾದುವುಗಳ ಹಿಂಸೆಗೆ ನಾಂದಿ ಹಾಡಿದರೆ ವಿಎಟ್ನಾಮ್, ಚೈನಾ, ಮುಂತಾದ ದೇಶಗಳಲ್ಲಿ ನಾಯಿ, ಜಿರಲೆ ಇವುಗಳ ಹತ್ಯೆಗೂ ಹಾಡಬೇಕು ಇತಿಶ್ರೀ. ಅಯ್ಯೋ ನಾಯ್ ತಿಂತಾರಾ ಚೈನಾದಲ್ಲಿ ಎಂದು ಮೂಗೆಳೆಯಬೇಡಿ. ಆರ್ಥಿಕ ಸಂಕಷ್ಟ ಜನರನ್ನು ಬಡಿದು ಕುರಿ ಕೋಳಿ, ಹಂದಿ ದುಬಾರಿ ಯಾದಾಗ ನಾಯಿಗಳು “ಮೆನ್ಯು ಪಟ್ಟಿ”- menu-  ಗೆ ಬಡ್ತಿ ಪಡೆದು ಕೊಳ್ಳುತ್ತವೆ ಕೆಲವು ದೇಶಗಳಲ್ಲಿ. ಕುರಿ ಕೋಳಿ ಹತ್ಯೆ ಕುರಿತ ಚರ್ಚೆಯಲ್ಲಿ ಓದುಗರೊಬ್ಬರು ಕೇಳಿದರು, “ಪ್ರಾಣ ಇರುವುದೆಲ್ಲ ಪ್ರಾಣಿಗಳೇ ….. ಜಗದೀಶ್ ಚಂದ್ರಬೋಸರು ತೋರಿಸಿದ್ದಾರೆ ಸಸ್ಯಗಳೀಗೂ ಪ್ರಾಣವಿದೆ ಹಾಗೂ ಅವೂ ಉಸಿರಾಡುತ್ತವೆ ಎಂದು. ಹಾಗಾಗಿ ಪ್ರಾಣಿ ದಯಾಸಂಘದವರು ಪ್ರಾಣವಿರುವ ಎಲ್ಲವನ್ನೂ ರಕ್ಷಿಸಲು ಮುಂದಾಗಬೇಕು ಎನ್ನುವುದು ನನ್ನ ಕೋರಿಕೆ!!!!!” ಓಹ್, ಇದೆಂಥಾ ಬಾಂಬ್ ಅಪ್ಪಾ! ಹಾಗಾದರೆ ನಾವು ತಿನ್ನೋದೇನನ್ನು? ನನಗೆ ಗೊತ್ತಿಲ್ಲ. ಆದರೆ ಅದುನ್ ತಿನ್ನೋದ್ ಬ್ಯಾನ್ ಮಾಡಿ, ಇದುನ್ ತಿನ್ನೋದನ್ ಬ್ಯಾನ್ ಮಾಡಿ ಎನ್ನುವವರಿಗೆ ಮತ್ತೊಂದು ಉತ್ತರ ಹೀಗೆ..

“ಅನುಕೂಲ ಶಾಸ್ತ್ರ” ದ proponent ಗಳಿಗೆ ತಮ್ಮದೇ ಆದ ತರ್ಕಗಳಿರುತ್ತವೆ, ಆ ತರ್ಕಗಳಿಗೆ ವಿವೇಚನೆ ಅಥವಾ reasoning ಕೆಲಸಕ್ಕೆ ಬಾರದ ಸಂಗತಿಗಳು, ಹಾಗೆಯೇ “ಅನುಕೂಲ ಶಾಸ್ತ್ರ” thrive ಆಗೋದು ನಂಬರ್ ಗೇಂ ನಲ್ಲಿ. ಸಂಖ್ಯೆ ಹೆಚ್ಚಿದ್ದರೆ ಅವರು ಹೇಳಿದ್ದೇ ಸರಿ, ಈ ವಿಷಯದಲ್ಲಿ ಮಾತ್ರ ಇವರುಗಳು truly democratic.
ತುರೇ ಮಣೆ ಕಯ್ಯಿಂದ ನಿರ್ದಯವಾಗಿ ತುರಿಸಿಕೊಳ್ಳುವ ತೆಂಗಿನಕಾಯಿ ಮತ್ತು ಹರಿಯುವ ಚಾಕುವಿನ ಅಡಿ ದಯನೀಯವಾಗಿ ನಲುಗುವ ಈರುಳ್ಳಿ ಬಗ್ಗೆ ಇವರುಗಳಿಗೆ ಕನಿಕರ ಭಾವ ತೋರಿದಾಗ ಅವುಗಳನ್ನು ಒಳಗೊಂಡ ತಿನಿಸಿಗೂ ಬರುತ್ತದೆ ಸಂಚಕಾರ.

ಈಗ ಚರ್ಚೆ ಪರಿಸಮಾಪ್ತಿ. ನಡೀರಿ ಮಿಲ್ಟ್ರಿ ಹೋಟೆಲ್ ಕಡೆ.  ಚೀನಿಯರು ನಮ್ಮ menu ಮೇಲೆ ಇನ್ನೂ ಧಾಳಿ ಮಾಡಿಲ್ಲ ತಾನೇ? ಇಲ್ದಿದ್ರೆ, ನಾಯ್, ಜಿರಲೆ….ಅಯ್ಯೋ….

ಬೇಡದ ಕಡೆ ತಲೆ ಹಾಕಿದ ಕರಡಿ

ನಮಗೆ ಅವಶ್ಯಕತೆ ಇರದ ಕಡೆ ತಲೆ ಹಾಕಬಾರದು ಎಂದು ಹಿರಿಯರ ಬುದ್ಧಿವಾದ. ಕಿತಾಪತಿ ಮಾಡುವವರನ್ನು ಕಂಡರೆ ಹೇಳುತ್ತಾರೆ ಬೇಡದೆ ಇರೋ ಜಾಗದಲ್ಲಿ ತಲೆ ಹಾಕೋದು ಅಂದ್ರೆ ಇವ್ನಿಗೆ ತುಂಬಾ ಇಷ್ಟ ಎಂದು ತೆಗಳೋದನ್ನೂ ನಾವು ಕೇಳಿದ್ದೇವೆ. ಆದರೆ ಇಲ್ಲಿ ಬೇಡ ಕಡೆ ತಲೆ ಹಾಕಿ ಮಂಗಳಾರತಿ ಮಾಡಿಸಿ ಕೊಂಡಿದ್ದು ಹುಲು ಮನುಜನಲ್ಲ. ಬದಲಿಗೆ ಮೈ ತುಂಬಾ ಕೇಶ ಇಟ್ಟುಕೊಂಡು ನಮ್ಮ ಮಕ್ಕಳಿಗೆ ಬೊಂಬೆ ರೂಪದಲ್ಲೂ, ನಿಜ ರೂದಲ್ಲೂ ಕಚಗುಳಿ ಇಡುವ ಜಾಂಬವ. ಕರಡಿ.

ಫ್ಲೋರಿಡಾ ರಾಜ್ಯದಲ್ಲಿರುವ “ಒಕಾಲಾ” ನಗರದಲ್ಲಿ ವಾಸಿಸುವ ಕರಡಿಯೊಂದು ತನ್ನ ತಲೆಯನ್ನು ಪ್ಲಾಸ್ಟಿಕ್ ಬಾಟಲಿ ಯೊಂದರಲ್ಲಿ ಸಿಕ್ಕಿಸಿಕೊಂಡು ಪರದಾಡಿತು. ಪೂರ್ತಿ ಹತ್ತು ದಿನ. ಓಹ್, ಹತ್ತು ದಿನಗಳ ಮನುಷ್ಯನ ನಿರ್ಲಕ್ಷ್ಯೆ ಕಾರಣ  ಕಾಲ ತಿನ್ನಲು, ಕುಡಿಯಲು ಆಗದೆ ಒದ್ದಾಡಿದ ಕರಡಿಗೆ ಕೊನೆಗೆ ಮುಕ್ತಿ ಸಿಕ್ಕಿದ್ದೂ ಭಾಗ್ಯಕ್ಕೆ ಮನುಷ್ಯನಿಂದಲೇ. ಪ್ರವಾಸದ ವೇಳೆ ಹೋದ ಹೋದೆಡೆ ನಮ್ಮ ಗಾರ್ಬೇಜ್ ಎಳೆ ದು ಕೊಂಡು ಹೋಗುವ ನಮಗೆ ನಿಸರ್ಗದ ಕಡೆ ನಮಗಿರುವ ಬೇಜವಾಬ್ದಾರಿತನಕ್ಕೆ ಪ್ರವಾಸ ಅಥವಾ ಪರ್ಯಟನ ಕಳೆದು ಬರುವಾಗ ನಮ್ಮ ಹಿಂದೆ ಬಿಟ್ಟು ಹೋಗುವ ತಿಪ್ಪೆಗಳೇ ಸಾಕ್ಷಿ.

ಜೆಡ್ಡಾ ದಿಂದ ಸುಮಾರು ೨೦೦ ಕಿ.ಮೀ ಇರುವ ನಮ್ಮ ಕೆಮ್ಮಣ್ಣು ಗುಂಡಿಯನ್ನು ಹೋಲುವ “ತಾಯಿಫ್” ಭೇಟಿಯ ವೇಳೆ ಬೆಟ್ಟದ ಕೆಳಗಿನ ದಾರಿಯಲ್ಲಿ ಒಂದು ಮರವನ್ನು ಕಂಡೆ. ಸಾಮಾನ್ಯವಾಗಿ ಮರ ಎಂದ ಮೇಲೆ ಎಲೆಗಳು ಇದ್ದೇ ಇರುತ್ತವೆ, ಅಲ್ಲವೇ? ಸಖೇದಾಶ್ಚರ್ಯ, ಇದೊಂದು ವಿಚಿತ್ರ ಮರವಾಗಿ ಕಂಡಿತು ನನಗೆ. ಮರದ ಟೊಂಗೆಯ ತುಂಬಾ ಬಣ್ಣ ಬಣ್ಣದ, ವಿವಿಧ ಆಕಾರದ, ಗಾತ್ರದ ಚೀಲಗಳು. ಪ್ಲಾಸ್ಟಿಕ್ ಚೀಲಗಳು. ಸಂಪೂರ್ಣ ಮರವನ್ನು ಆವರಿಸಿ ಬಿಟ್ಟಿತ್ತು. ಗಾಡಿಯಲ್ಲಿ ಹೋಗುವಾಗ ಮೇಯೋದು, ತದನಂತರ ಬಿಡೋದು ಗಾಳಿ ಪಟವ. ಅಲ್ಲಲ್ಲ, ಪ್ಲಾಸ್ಟಿಕ್ ಪಟವ. ಸ್ವಲ್ಪ ದೂರ ಹೋದ ನಂತರವೇ ನನ್ನ ಮಂದ ಮಾತಿಗೆ ತೋಚಿದ್ದು ಒಹ್, ಈ ಮರದ ಚಿತ್ರವೊಂದನ್ನು ಕ್ಲಿಕ್ಕಿಸಬೇಕಿತ್ತು ಎಂದು.       

ತನ್ನ ಸುಂದರ ಮೂತಿಯನ್ನು ಈ ಪ್ಲಾಸ್ಟಿಕ್ ಬಾಟಲಿಗೆ ಸಿಕ್ಕಿಸಿಕೊಂಡ ಕೇವಲ ಆರು ತಿಂಗಳ ಹಸುಳೆ ಕರಡಿಗೆ ವನ್ಯ ಜೀವಿ ಸಂರಕ್ಷಕರು ಬಂದು ಮೊದಲು ಪಕ್ಕದಲ್ಲೇ ಇದ್ದ ಅದರ ತಾಯಿಗೆ ಶಾಂತ ಗೊಳಿಸುವ ಚಚ್ಚು ಮದ್ದನ್ನು ನೀಡಿ ಪ್ಲಾಸ್ಟಿಕ್ ಮುಕ್ತ ಗೊಳಿಸಿದರು. ಅವರ ಪ್ರಕಾರ ಆ ಕರಡಿ ಒಂದೆರಡು ದಿನಗಳಲ್ಲಿ ಸಾಯುತ್ತಿತ್ತಂತೆ ಬಾಟಲಿ ಕಾರಣ  ತಿನ್ನಲು ಕುಡಿಯಲು ಆಗದೆ.     

ಚಿತ್ರ ಕೃಪೆ: http://www.newstimes.com/news/article/Plastic-jar-removed-from-Fla-bear-cub-s-head-615774.php#photo-3