“ಪೆರು” ವಿಗೆ ಈ ವರುಷದ ನೊಬೆಲ್ ಸಾಹಿತ್ಯ ಪ್ರಶಸ್ತಿ



 

ಸಾಹಿತ್ಯದಲ್ಲಿ ಈ ವರ್ಷ ನೊಬೆಲ್ ಗಿಟ್ಟಿಸಿದ ಲ್ಯಾಟಿನ್ ಅಮೇರಿಕೆಯ “ಪೆರು” ದೇಶದ ಮಾರಿಯೋ ವರ್ಗಾಸ್ ಲೌಸ  ಕಾಗದ ಪುಸ್ತಕ ಪ್ರಿಯರು. “ಇ” ಪುಸ್ತಕಗಳು ಮತ್ತು ಇವನ್ನ ಓದಲು ಅನುಕೂಲ ಮಾಡಿಕೊಡುವ ಇಲೆಕ್ಟ್ರೋನಿಕ್ ಗೆಜೀಟ್ ಗಳು ಎಬ್ಬಿಸುತ್ತಿರುವ ಬಿರುಗಾಳಿಗೆ ಶತಮಾನಗಳ ನಮ್ಮ ಮಿತ್ರ “ಬಡಪಾಯಿ ಕಾಗದ” ತೂರಿ ಹೋಗುವುದು ಅವರಿಗೆ ಇಷ್ಟವಲ್ಲ.

ಮಾರಿಯೋ ವರ್ಗಾಸ್ ಅವರ ಪ್ರಥಮ ಪುಸ್ತಕ ೧೯೬೪ ರಲ್ಲಿ ಪ್ರಕಟ. ಬರಹದ ೪೬ ವರುಷಗಳ ಕಾಲದಲ್ಲಿ ವಿಶ್ವದ ಅತ್ಯುನ್ನತ ಪ್ರಶಸ್ತಿಗೆ ಭಾಜನರು ಈ ಲೇಖಕರು. ಶುಭ ಮುಂಜಾನೆ ಎನ್ನುವ ಸಂದೇಶದ ಬೆನ್ನಲ್ಲೇ ತಮಗೆ ನೊಬೆಲ್ ಸಿಕ್ಕಿತು ಎನ್ನುವ ಸುದ್ದಿಯೂ ಬಂದಿತು. ಇವರ ಆಸಕ್ತಿ ಬರೀ ಸಾಹಿತ್ಯ ಕೃಷಿಗೆ ಮಾತ್ರ ಸೀಮಿತವಲ್ಲ, ಅನ್ಯಾಯದ ವಿರುದ್ಧದ ಜನರ ಹೋರಾಟದಲ್ಲೂ ಭಾಗಿಯಾಗಿ (ನಮ್ಮ ಅರುಂಧತಿ ರಾಯ್ ರೀತಿ) ಹಲವು ಸಂಕಷ್ಟಗಳನ್ನು ಅನುಭವಿಸಿದ ಸಾಮಾಜಿಕ ಲೇಖಕ. ತನ್ನ ಹುಟ್ಟೂರಿನಲ್ಲಿ ಆಳುವವರ ದಬ್ಬಾಳಿಕೆ ಅತಿಯಾಗಿ ಅಲ್ಲಿನ ಸೇನಾಧಿಕಾರಿ ಮಾರಿಯೋ ಲೌಸ ಅವರ ಪೌರತ್ವ ಪೆರುವಿನ “ಭೌಗೋಳಿಕ ಆಕಸ್ಮಿಕ” (geographical accident) ಆಗಿದ್ದು ದೇಶದ ಪೌರತ್ವವನ್ನು ರದ್ದು ಗೊಳಿಸ ಬೇಕೆಂದು ಸರಕಾರಕ್ಕೆ ಶಿಫಾರಸ್ಸು ಮಾಡಿದಾಗ ಅಪಾಯ ಮನಗಂಡ ಈ ಲೇಖಕ ಸ್ಪೇನ್ ದೇಶದ ಪೌರತ್ವ ಪಡೆದು ಅದರ ಜೊತೆಗೆ ಪೆರುವಿನ ಪುರತ್ವವನ್ನೂ ಉಳಿಸಿಕೊಂಡರು. ಪ್ರಬಂಧಗಳು, ನಾಟಕ, ಸಾಹಿತ್ಯ ಮತ್ತು ರಾಜಕೀಯ ಹೊರಾಟಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿರುವ ಈ ಲೇಖಕ ಅಮೆರಿಕೆಯ ಮತ್ತು ಅಇರೋಪ್ಯ ದೇಶಗಳ ವಿಶ್ವ ವಿದ್ಯಾಲಯಗಳಿಗೆ ಅತಿಥಿ ಪ್ರಾಧ್ಯಾಪಕರಾಗಿ, ಭಾಷಣಕಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಈ ರೀತಿಯ ಹಲವು ದೇಶಗಳ ಬಿಡುವಿಲ್ಲದ  ಪರ್ಯಟನದಿಂದ ಬರವಣಿಗೆಗೆ ತೊಡಕಾಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ ಉತ್ತರವಾಗಿ  “ವಾಸ್ತವವಾಗಿ ವಿವಿಧ ಭಾಷೆ ಗಳೊಂದಿಗಿನ ತಮ್ಮ ಬದುಕು ತಮ್ಮ ಅರಿವನ್ನು ಹೆಚ್ಚಿಸಿದ್ದು, ಒಂದೇ ಭಾವನೆಯನ್ನು ಹೇಗೆ ವಿವಿಧ ಭಾಷೆಗಳು ವ್ಯಕ್ತಪಡಿಸುತ್ತವೆ ಎನ್ನುವ ಸೂಕ್ಷ್ಮತೆ ಸಹ ತನಗೆ ಕಾಣಲು ಸಿಗುತ್ತದೆ, ಹಾಗೆಯೇ ಮಾತೃ ಭಾಷೆಯೊಂದಿಗಿನ ನನ್ನ ನಂಟು ಇತರೆ ಭಾಷೆ ಗಳೊಂದಿಗಿನ ಒಡನಾಟದಿಂದ ಇನ್ನಷ್ಟು ಶ್ರೀಮಂತ ಗೊಂಡಿದೆ” ಎಂದು ಹೇಳಿದರು. ಸಂದರ್ಶನದ ವೇಳೆ ಹೇಳಿದ ಈ ಮಾತುಗಳು ಗಡಿಬಿಡಿಯ ಅಂತಾರಾಷ್ಟ್ರೀಯ ಬದುಕು ಈ ಲೇಖಕನ ಸಂಸ್ಕಾರವನ್ನು ಹೇಗೆ ಶ್ರೀಮಂತ ಗೊಳಿಸಿತು ಎನ್ನುವ ಸತ್ಯವನ್ನು ನಮಗೆ ತೋರಿಸುತ್ತದೆ.

ಲ್ಯಾಟಿನ್ ಅಮೆರಿಕಾದ ದೇಶಗಳು ಕಿತ್ತು ತಿನ್ನುವ ಬಡತನದೊಂದಿಗೆ ಮಾದಕ ದ್ರವ್ಯಗಳ ಮಾರಾಟ ಮತ್ತು ದಂಧೆಯನ್ನು ನಡೆಸುವ ಭೂಗತ ದೊರೆಗಳ ದಬ್ಬಾಳಿಕೆ ಯಿಂದಲೂ ತತ್ತರಿಸುತ್ತಿದೆ. ಈ ಹಾವಳಿಯನ್ನ ತಡೆಯಲು ಸರಕಾರಗಳು ಕೋಟ್ಯಂತರ ಡಾಲರುಗಳನ್ನು ಇವರ ವಿರುದ್ಧ ದ ಹೋರಾಟಕ್ಕೆ ವ್ಯಯಿಸಿದರೂ ಆ ಹಣ ಲಂಚಕೋರ ಸೇನಾಧಿಕಾರಿಗಳ, ರಾಜಕಾರಣಿಗಳ ಪಾಲಾಗುವುದನ್ನು ಕಂಡ ಈ ಲೇಖಕ ಸರಕಾರದ ಈ ನೀತಿಯನ್ನು ವಿರೋಧಿಸಿ ಹಣವನ್ನ ಶಸ್ತ್ರಗಳನ್ನು ಖರೀದಿಸಲು ವ್ಯಯಿಸದೆ ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವ ಅಭಿಯಾನವನ್ನು ಆರಂಭಿಸಲು ಮತ್ತು ಮಾದಕ ದ್ರವ್ಯವ್ಯಸನಿಗಳ ಚಿಕಿತ್ಸೆಗೆ ಖರ್ಚು ಮಾಡಲು ಕರೆ ನೀಡಿದರು. ಸೇನಾಧಿಕಾರಿಗಳ ಮತ್ತು ರಾಜಕಾರಣಿಗಳ ವಿಷವರ್ತುಲ ಇವರ ಮಾತುಗಳನ್ನು ಕೇಳುವ ಗೋಜಿಗೆ ಹೋಗಲಿಲ್ಲ.

ಲೇಖಕರೂ ಸಹ ಸಾಮಾನ್ಯ ಜನರಂತೆ ಪೌರರಾಗಿದ್ದು ಜನರ ಹೋರಾಟ ಮತ್ತು ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವ ನೈತಿಕ ಹೊಣೆ ಅವರ ಮೇಲೆ ಇರಬೇಕು ಎಂದು ನೊಬೆಲ್ ಪ್ರಶಸ್ತಿ ಪಡೆಯುವ ಮುನ್ನ ನಡೆದ ಚರ್ಚೆಯಲ್ಲಿ ಹೇಳಿದ್ದರು ಲೌಸ. ೧೯೯೦ ರಲ್ಲಿ ಆಲ್ಬರ್ಟೋ ಫುಜಿಮೋರಿ ವಿರುದ್ಧ ಸೋತ ಈ ಲೇಖಕ ಮತ್ತೆ ರಾಜಕೀಯದ ಕಡೆ ತಲೆಹಾಕದೆ ಪೂರ್ಣ ಸಮಯ ಬರವಣಿಗೆಯಲ್ಲಿ ತೊಡಗಿಸಿಕೊಂಡರು. ಸರ್ವಾಧಿಕಾರಿಗಳನ್ನು ಚುನಾವಣೆಯಲ್ಲಿ ಬಗ್ಗು ಬಡಿಯದಿದ್ದರೇನಂತೆ ತಮ್ಮ ಪ್ರಖರ ಬರಹವನ್ನೇ ಅಸ್ತ್ರವನ್ನಾಗಿ ಉಪಯೋಗಿಸಿ ಲೇಖನಿಯೂ ಓಟು ಗಳಷ್ಟೇ ಪರಿಣಾಮಕಾರಿ ಎಂದು ತೋರಿಸಿದರು. “ಪದಗಳೇ ಕೃತ್ಯಗಳು…. ಬರಹದ ಮೂಲಕ ಚರಿತ್ರೆಯನ್ನು ಬದಲಿಸಲು ಸಾಧ್ಯ” ಎಂದು ಬಲವಾಗಿ ನಂಬಿದವರು. ಲ್ಯಾಟಿನ್ ಅಮೆರಿಕಾದಲ್ಲಿ ಎಲ್ಲೇ ಶೋಷಣೆ ಅನ್ಯಾಯ ನಡೆದರೂ ಅಲ್ಲಿಗೆ ಧಾವಿಸುವ ಈ ಲೇಖಕ ತಾವು ಕಂಡಿದ್ದನ್ನು ಬರೆದು ನೀಚ ಕೃತ್ಯಗಳನ್ನು ಬಯಲಿಗೆಳೆಯುವ ಸಾಹಸಕ್ಕೆ ಕೈ ಹಾಕುತ್ತಾರೆ. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕ್ರೌರ್ಯ ಸಹ ಇವರ ಲೇಖನಿಯ ಮೊನಚಿಗು ಸಿಕ್ಕು ಸಮಾಜದ ಕಣ್ಣು ತೆರೆಸುವಂತೆ ಮಾಡುತ್ತದೆ ಇವರ ಬರಹಗಳು. ಇಂಥದ್ದೇ ಒಂದು ಘಟನೆ ಮತ್ತೊಂದು “ಡೊಮಿನಿಕನ್ ರೆಪಬ್ಲಿಕ್”. ಅಲ್ಲಿನ ಸರ್ವಾಧಿಕಾರಿ ರಾಫೆಲ್ ಟ್ರೂಜಿಲೋ ೧೯೩೦ ರಿಂದ ೧೯೬೧ ರವರೆಗಿನ ತನ್ನ ಆಳ್ವಿಕೆಯಲ್ಲಿ ತನ್ನ ಮಗಂದಿರೊಂದಿಗೆ ಮಹಿಳೆಯರ ಮೇಲೆ ಅತ್ಯಾಚಾರ ದೌರ್ಜನ್ಯವನ್ನು ಪ್ರತಿರೋಧವಿಲ್ಲದೆ ನಡೆಸುತ್ತಿದ್ದ. ಎಷ್ಟೋ ಜನ ತಮ್ಮ ಹೆಣ್ಣು ಮಕ್ಕಳನ್ನು ಈ ಸರ್ವಾಧಿಕಾರಿ ಮತ್ತು ಮಗಂದಿ ರಿಗೆ “ಉಡುಗೊರೆ” ಯಾಗಿ ಕೊಡುತ್ತಿದ್ದರಂತೆ ಭಯ ಬಿದ್ದು. (ಉತ್ತರ ಭಾರತದ ಠಾಕೂರ ಜಮೀನ್ದಾರರಿಗೆ ಹೆದರಿ ಬಡ ರೈತರು ಬದುಕಿದಂತೆ).  ರಾಫೆಲೋ ನ ದೌರ್ಜನ್ಯವನ್ನು “the feast of the goat” ಪುಸ್ತಕದಲ್ಲಿ ಸವಿವರವಾಗಿ ವರ್ಣಿಸಿದ್ದಾರೆ ಈ ಲೇಖಕ. ಇದೇ ತೆರನಾದ ಮಹಿಳೆಯರ ಮೇಲಿನ ದೌರ್ಜನ್ಯ ಇರಾಕಿನ ಸದ್ದಾಮ್ ಹುಸೇನರ ಮಕ್ಕಳೂ ಬೀದಿಯಲ್ಲಿ ಕಂಡ ಸುಂದರ ಹೆಣ್ಣುಮಕ್ಕಳನ್ನು ಎಗರಿಸಿಕೊಂಡು ಹೋಗುತ್ತಿದ್ದರು ಎಂದು ಈ ಲೇಖಕರು ಹೇಳಿದರೂ  ( ಅಮೇರಿಕ ನಿಯಂತ್ರಿತ ಮಾಧ್ಯಮಗಳ ಅಪಪ್ರಚಾರವೂ ಆಗಿರಲಿಕ್ಕೆ ಸಾಕು ) “ಕ್ರೌರ್ಯ ಯಾವುದೇ ಸರ್ವಾಧಿಕಾರಿಗಳ ಆಡಳಿತದಲ್ಲೂ ಸಮನಾಗಿರುತ್ತದೆ” ಎನ್ನುವ ಅಭಿಪ್ರಾಯ “ಮಾರಿಯೋ ವರ್ಗಾಸ್ ಲೌಸ” ಅವರದು. ಕೊನೆಯದಾಗಿ ಸಾಹಿತ್ಯದ ಬಗ್ಗೆ ವರ್ಗಾಸ್ ಅವರ, ವಿಶೇಷವಾಗಿ ನಮಗೆ ಅನ್ವಯವಾಗುವ,   ಮುತ್ತಿನಂಥ ಮಾತುಗಳು…

“I think that literature has the important effect of creating free, independent, critical citizens who cannot be manipulated.”

 

 

ನಮಗೆ “ಹುಬ್ಬು” ಗಳೇಕಪ್ಪಾ ?

ಎಲ್ಲಾ ಮಕ್ಕಳೂ ಚಂದಿರನೇಕೆ ಓಡುವನಮ್ಮಾ ಎಂದು ಕೌತುಕದಿಂದ ಕೇಳಿದರೆ ನನ್ನ ಮಗನಿಗೆ ಬೇರೆಯದೇ ಆದ ಒಂದು ಚಿಂತೆ.

ನಮಗೆ “ಹುಬ್ಬು” ಗಳೇಕಪ್ಪಾ ? ಹುಬ್ಬು ಹಾರಿಸುತ್ತಾ ಕೇಳಿದ ನನ್ನ ಮಗ ನಿನ್ನೆ ರಾತ್ರಿ ಅವನ ಬೆಡ್ ಟೈಮ್ ಸ್ಟೋರಿ ಸೆಶನ್ ಸಮಯ. ನಾನು ಹೇಳುತ್ತಿದ್ದ ಕಥೆಯ ಬಗ್ಗೆ ಅವನು ಪ್ರಶ್ನೆ ಕೇಳಿದ್ದರೆ ಕಥೆಯಲ್ಲಿ ಪ್ರಶ್ನೆಯಿಲ್ಲ ಎಂದು ಅವನ ಪುಟ್ಟ ಬಾಯಿ ಮುಚ್ಚಿಸಬಹುದಿತ್ತು. ಆದರೆ ಕೇಳುತ್ತಿರುವುದು ಲಾಜಿಕ್ ಆದ ಪ್ರಶ್ನೆಯಾದ್ದರಿಂದ ಒಂದು ಕ್ಷಣ ಮೇಲೆ ಏರಿದ ನನ್ನ ಹುಬ್ಬುಅಲ್ಲೇ ನಿಂತಿತು ನನ್ನ ಸಮಜಾಯಷಿಗಾಗಿ ಕಾಯುತ್ತಾ. ಹೌದೇ, ಸುಂದರ ಮೊಗದ ಮೇಲೆ, ಬೊಗಸೆ ಕಣ್ಣುಗಳ ಮೇಲೆ ಹುಬ್ಬುಗಳೆಂಬ “ಛಾವಣಿ” ಯ ಅವಶ್ಯಕತೆ ಏನಿತ್ತೋ? ಕಣ್ಣುಗಳನ್ನು ರಕ್ಷಿಸಲು ರೆಪ್ಪೆಗಳಿದ್ದೆ ಇವೆಯಲ್ಲಾ? ಓಹ್, ಬಹುಶಃ ಡಬ್ಬಲ್ ಪ್ರೊಟೆಕ್ಷನ್ ಆಗಿ ಇರಬೇಕು ಹುಬ್ಬುಗಳು ಬಡಿಯುವ ರೆಪ್ಪೆಗಳಿಗೆ ಸಂಗಾತಿಯಾಗಿ.  

ಹುಬ್ಬು ಮತ್ತು ಮೂಗಿನ ರೂಪ, ಅಂಕು ಡೊಂಕಿನ ಬಗ್ಗೆಯೂ ಸಾಕಷ್ಟು ಕುತೂಹಲ ಇದ್ದಿದ್ದೇ.

ಮಹಿಳೆಯರಿಗೆ ಕರಡಿಗಿರುವಂಥ ಹುಬ್ಬಿದ್ದರೆ ಅದನ್ನು ರೆಪೇರಿ ಮಾಡಿಸಿಕೊಳ್ಳುತ್ತಾರೆ. ಅದಕ್ಕೆ ಆಂಗ್ಲ ಭಾಷೆಯಲ್ಲಿ blepharoptosis ಎಂದು ಕರೆಯುತ್ತಾರೆ.  ಕಾಲುಗುರು ಸ್ವಲ್ಪ ಡೊಂಕಾದಾಗ toe nail repair ಇರುವಂತೆ ಮುಖಕ್ಕೆ ಕಿರೀಟ ಪ್ರಾಯವಾಗಿ ಕಂಗೊಳಿಸುವ ಹುಬ್ಬಿಗೆ ಇಲ್ಲದೆ ಇರುತ್ತದೆಯೇ ಒಂದು ರೆಪೇರಿ? ಹಾಂ, ಈ ಹುಬ್ಬಿನ ರೆಪೆರಿಯೊಂದಿಗೆ ಅದಕ್ಕೊಂದು ಚೆಂದದ ರಿಂಗ್ ಇದ್ದರೆ ಇನ್ನೂ ಚೆಂದ ಅಲ್ಲವೇ? ಮೂಗಿಗೆ, ಕಾಲುಂಗುರಕ್ಕೆ, ಹೊಕ್ಕುಳಿಗೆ ಒಂದೊಂದು ರಿಂಗ್ ಇರುವಾಗ ಹುಬ್ಬಿಗೆ ಬೇಕೇ ಬೇಕು ಮಾರಾಯ್ರೆ ಒಂದು ರಿಂಗು.         

ಮತ್ತೊಂದು ಮಾತು, ಹೆಂಡತಿ ಪಕ್ಕದಲ್ಲಿಲ್ಲ. ಅರಬ್ ಮಹಿಳೆಯರ ಹುಬ್ಬಿಗೆ ಅದೇನು ಸೌಂದರ್ಯವೋ ಏನೋ? ಕಾಮನ ಬಿಲ್ಲುಗಳು ಮೋಡಗಳೊಳಗೆ ಅವಿತು ಕೊಳ್ಳುತ್ತವೆ ಇವರ ಹುಬ್ಬುಗಳ ಸೌಂದರ್ಯವನ್ನು ನೋಡಿ. ಬುರ್ಖಾ ಧರಿಸಿ, ಆದರ ಮೇಲೆ ಮೂಗನ್ನು ಮುಚ್ಚುವ “ನಿಕಾಬ್” ಎನ್ನುವ  ತೆಳು ಪರದೆಯನ್ನು ಧರಿಸಿದಾಗ ಹುಬ್ಬುಗಳು ಪ್ರಾಮುಖ್ಯತೆ ಪಡೆಯುತ್ತವೆ ಇವರ ಸೌಂದರ್ಯ ಪ್ರದರ್ಶನದಲ್ಲಿ. ಕೆಲವೊಮ್ಮೆ ಅನ್ನಿಸುವುದಿದೆ ಇಷ್ಟೆಲ್ಲಾ ಮೈ ಮುಚ್ಚಿ ಕೊಂಡು, ಈ ಪರಿಯಾಗಿ ಹುಬ್ಬುಗಳನ್ನು ರೆಪೇರಿ ಮಾಡಿಸಿಕೊಂಡು ಪುರುಷರ ಅಲೆಯುವ ಕಣ್ಣುಗಳಿಗೆ ಏಕೆ ಇವರು torment ಮಾಡುತ್ತಾರೋ ಎಂದು. ಇಸ್ಲಾಂ ಹುಬ್ಬನ್ನು ರೆಪೇರಿ ಮಾಡಿಸಿ ಕೊಳ್ಳುವ ಗೀಳಿಗೆ ಹುಬ್ಬುಗಂಟಿಕ್ಕಿ ಅಸಮ್ಮತಿ ಸೂಚಿಸಿದರೂ ಅರಬ್ ಲಲನಾ ಮಣಿಗಳಿಗೆ ಅದರ ಪರಿವೆ ಇಲ್ಲ. ಈ ವಿಷಯದಲ್ಲಿ ಇನ್ನೂ ಯಾವುದೇ ಫತ್ವ ಬಂದ ನೆನಪಿಲ್ಲ.     

ಈಗ ನನ್ನ ಮಗನ ಪ್ರಶ್ನೆಗೆ ಎಲ್ಲಿದೆ ಉತ್ತರ? ಇಗೋ ಇಲ್ಲಿ. ತಲೆಯ ಮೇಲಿನಿಂದ ಮಳೆ ಹನಿ, ಹೇನು, ಹೊಟ್ಟು ಇತ್ಯಾದಿಗಳು ಕಣ್ಣಿನೊಳಗೆ ಬೀಳದೆ ಇರಲು ಇರುವ ಸಿಸ್ಟಂ ಹುಬ್ಬು. ಅಷ್ಟೇ ಅಲ್ಲ ಸೂರ್ಯನ ಪ್ರಖರ ಶಾಖ ನೇರವಾಗಿ ಕಣ್ಣಿಗೆ ಬೀಳದಂತೆ ತಡೆಯುತ್ತದೆ ಕೂಡಾ ನಮ್ಮ ಹುಬ್ಬುಗಳು.