ಅ-ಣ್ಣಾ-ರಣ್ಯ ರೋದನ

ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳುವಳಿ ೧೯೪೨ ರಲ್ಲಿ ಆರಂಭವಾಯಿತು.  ಸ್ವಾತಂತ್ರ್ಯಕ್ಕಾಗಿನ ತುಡಿತ, ದಾಸ್ಯದಿಂದ ಬಿಡಿಸಿ ಕೊಂಡು ನಮ್ಮನ್ನು ನಾವೇ ಆಳಿಕೊಳ್ಳುವ ಮಹದಾಸೆ ಈ ಚಳುವಳಿಗೆ ಪ್ರೇರಣೆ. ಆರು ವರ್ಷಗಳ ಹೋರಾಟದ ನಂತರ ಬ್ರಿಟಿಷರು ನಮ್ಮನ್ನು ದಾಸ್ಯ ಮುಕ್ತ ಗೊಳಿಸಿದರು ೧೯೪೭ ರಲ್ಲಿ. ಸ್ವಾತಂತ್ರ್ಯ ತರುವ ಹರ್ಷ, ಪುಳಕವನ್ನು ಭಾರತೀಯರು ಅನುಭವಿಸಿದರು.  ಆದರೆ ಅರವತ್ತೈದು ವರ್ಷಗಳ ನಂತರ ನಾವು ನಮಗರಿವಿಲ್ಲದೆಯೇ ಬಾಣಲೆಯಿಂದ ಬೆಂಕಿಗೆ ಜಾರಿದ ವಾಸ್ತವದ ಅರಿವು ನಿಧಾನವಾಗಿ ಆಗ ತೊಡಗಿತು.  

೧೯೪೭ ರಲ್ಲಿ ನಮ್ಮ ಹಾಗೇ ಕಡುಬಡತನ ದಿಂದ ಬಳಲುತ್ತಿದ್ದ ದೇಶ ದಕ್ಷಿಣ ಕೊರಿಯಾ ಇಂದು ಶ್ರೀಮಂತಿಕೆಯಲ್ಲಿ ವಿಶ್ವದ ಅಗ್ರಮಾನ್ಯ ದೇಶಗಳ ಸಾಲಿನಲ್ಲಿ ನಿಂತಿದೆ. ನಮ್ಮ ನೆರೆಯ ಚೀನಾ ಪ್ರಜಾಪ್ರಭುತ್ವ, ಅದೂ, ಇದೂ ಎಂದು ಯಾವುದೇ ಸದ್ದು ಗದ್ದಲ ಮಾಡದೆ ತನ್ನಷ್ಟಕ್ಕೆ ತಾನೇ ಅಭಿವೃದ್ಧಿ ಪಥದಲ್ಲಿ ದಾಪುಗಾಲು ಹಾಕಿದೆ. ಆದರೆ ನಾವು ಮಾತ್ರ ರಾಜಕಾರಣಿ – ಅಧಿಕಾರಶಾಹಿ ಚಕ್ರವ್ಯೂಹದಲ್ಲಿ ಸಿಕ್ಕು ನರಳುತ್ತಿದ್ದೇವೆ. ಭ್ರಷ್ಟಾಚಾರ ದೇಶವನ್ನು ಅಗ್ನಿ ಪರೀಕ್ಷೆಗೆ ಒಡ್ಡಿದೆ.   

ದಿನೇ ದಿನೇ ಒಂದಲ್ಲ ಒಂದು ಹಗರಣದಿಂದ ಕಂಗೆಟ್ಟ ದೇಶಕ್ಕೆ ಆಶಾ ದೀಪವಾಗಿ ಬಂದರು ಅಣ್ಣಾ ಹಜಾರೆ. ‘ಎನಫ್ ಈಸ್ ಎನಫ್’ ಎಂದು ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದರು. ಜನರೂ ಆರಂಭದಲ್ಲಿ ಹುಮ್ಮಸ್ಸು ತೋರಿಸಿದರು. ಅಣ್ಣಾ ಜನಪ್ರಿಯತೆ ಪಡೆಯುತ್ತಿದ್ದಂತೆ ಸರಕಾರ ಎಚ್ಚೆತ್ತು ಕೊಳ್ಳಲು ಆರಂಭಿಸಿತು. ಅಣ್ಣಾ ಜೊತೆ ಮಾಜಿ ಪೊಲೀಸ್ ಅಧಿಕಾರಿ ಕಿರಣ್ ಬೇಡಿ ಸಹ ಸೇರಿಕೊಂಡರು. ಇವರು ತಮ್ಮ ಅಧಿಕಾರಾವಧಿಯಲ್ಲಿ ಎಂಥೆಂಥ ಲಂಚಗುಳಿ ಅಧಿಕಾರಿಗಳನ್ನು ಕಂಡಿರಲಿಕ್ಕಿಲ್ಲ. ಬೇಡಿ ಅವರು ಭ್ರಷ್ಟ ಅಧಿಕಾರಿಗಳ ವಿರುದ್ಧ ಸೊಲ್ಲೆತ್ತಿದ್ದು ನಾವೆಂದಾದರೂ ಕೇಳಿದ್ದೇವೆಯೇ? ಎಲ್ಲಿಂದ ಪುಟಿದೆದ್ದಿತು ಲಂಚದ ವಿರುದ್ಧ ಹೋರಾಡೋ ಹಂಬಲ? ಕಿರಣ್ ಬೇಡಿ ಮಧ್ಯೆ ಮತ್ತೊಂದು ವ್ಯಕ್ತಿ, ಅರವಿಂದ  ಕೇಜರಿವಾಲ ಅಂತೆ. ಸ್ವಾತಂತ್ರ್ಯ ಚಳುವಳಿಯಲ್ಲೋ, ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲೋ, ಬೇರೆಲ್ಲೂ ಈ ವ್ಯಕ್ತಿಯ ಹೆಸರು ಕೇಳಿದ್ದಿಲ್ಲ. ಯಾರೀತ? who is this kejriwala? ‘ವೋ, ಕೇಸರಿ ವಾಲ ಹೈ’ ಎಂದು ಮೂದಲಿಸಿತು ಕಾಂಗ್ರೆಸ್.   ಇವೆಲ್ಲಾ ಆದ ನಂತರ ಜನ ರೊಚ್ಚಿಗೆದ್ದಿದ್ದನ್ನು ಗಮನಿಸಿದ ಕೇಂದ್ರದ ಆಳುವ ಪಕ್ಷಕ್ಕೆ ಈಗ ದುರ್ಬೀನಿಟ್ಟು ನೋಡ ತೊಡಗಿತು. ಅಣ್ಣಾ ಜೊತೆ ವೇದಿಕೆಯ ಮೇಲೆ ಯಾರ್ಯಾರಿದ್ದಾರೆ? ಅವರ ಹಿನ್ನೆಲೆ ಏನು? ಯಾವ ಸಂಘಟನೆಗಳ ಒಲವು ಇವರಿಗೆ? ಹಿಡ್ಡನ್ ಅಜೆಂಡಾ ಏನಾದರೂ ಇದೆಯೇ ಈ ಚಳುವಳಿ ಹಿಂದೆ? ಹೀಗೆ ನೂರೆಂಟು ಅನುಮಾನಗಳನ್ನು ಹರಿ ಬಿಟ್ಟು ಜನರನ್ನು ಕನ್ಫ್ಯೂಸ್ ಮಾಡಿ ಬಿಟ್ಟರು.  ಎಡಬಿಡದ ವಾಕ್ಪ್ರಹಾರ, ಆರೋಪ ಪ್ರತ್ಯಾರೋಪಗಳ ಗದ್ದಲದಲ್ಲಿ ಚಳುವಳಿ ತನ್ನ ಮಹತ್ವ ಕಳೆದು ಕೊಂಡಿತು. ಈ ಚಳುವಳಿಯಲ್ಲೂ ನುಸುಳಲೇ ಬೇಕಿತ್ತೆ ರಾಜಕಾರಣ?

ದಿನನಿತ್ಯ ಬದುಕಿನ ಜಂಜಾಟದಲ್ಲಿ ಸಿಕ್ಕಿ ಕೊಂಡ ಸಾಮಾನ್ಯ ಪ್ರಜೆ ಲಂಚದ ವಿರುದ್ಧ ತನ್ನದೇ ಆದ ರೀತಿಯಲ್ಲಿ ಪ್ರತಿಭಟಿಸಿದ. ಲಂಚಕ್ಕಾಗಿನ ಅಧಿಕಾರಿಗಳ  ತೀರದ  ದಾಹಕ್ಕೆ ಬೇರೆ ದಾರಿ, ಕಾಣದೇ ಮೂರು ಗೋಣಿಚೀಲ ತುಂಬಾ ಸುಮಾರು ನಲವತ್ತು ತರಾ ವರಿ, ನಮೂನೆ ನಮೂನೆ (ಥೇಟ್ ಲಂಚಗುಳಿಗಳ ಥರ) ಹಾವುಗಳನ್ನು ಸರಕಾರೀ ಕಛೇರಿಯೊಳಕ್ಕೆ ತಂದು ಗೋಣಿ ಚೀಲ ಬರಿದು ಮಾಡಿ ಬಿಟ್ಟರು ರೈತರಾದ ಹುಕ್ಕುಲ್ ಖಾನ್ ಮತ್ತು ರಾಮ್ ಕುಲ್ ರಾಮ್. ಭಯಭೀತರಾದ ಅಧಿಕಾರಿಗಳು ಓಟ ಕಿತ್ತರು. ಇದು ಹತಾಶ ಪ್ರಜೆಯ ಹತಾಶ ಪ್ರತಿಕ್ರಿಯೆ. ಇದರಿಂದ ಅಧಿಕಾರಿಗಳು ಏನಾದರೂ ಕಲಿತಾರೆಯೇ ಪಾಠವನ್ನು? no chance. ಹಾವುಗಳನ್ನು ಹರಿ ಬಿಟ್ಟ ರೈತರನ್ನೇ ಖಳ ನಾಯಕರನ್ನಾಗಿಸಿ ಬಿಡುತ್ತಾರೆ, ಈ ಹಾವುಗಳಿಗಿಂತ ಅಪಾಯಕಾರಿಯಾದ ಅಧಿಕಾರಿಶಾಹಿ ಹಾವು.        

ಲಂಚದ ಹಾವಳಿ ವಿರುದ್ಧ ನಮ್ಮಲ್ಲಿ ಬಹಳಷ್ಟು ಕಾನೂನುಗಳಿವೆ. ಕಾನೂನಿನ ಪ್ರಕಾರ ಲಂಚ ಕೊಡುವುದು ಲಂಚ ತೆಗೆದುಕೊಳ್ಳುವಷ್ಟೇ ಅಪರಾಧ. ಲಂಚಗುಳಿಗಳ ವಿರುದ್ಧ ಸಮರ ಸಾರಿದ ಅಣ್ಣಾ ಲಂಚ ಕೊಡುವವರ ವಿರುದ್ಧ ಸೊಲ್ಲನ್ನೇಕೆ ಎತ್ತುತ್ತಿಲ್ಲ, ಇದು ಕೆಲವರ ಜಿಜ್ಞಾಸೆ. ಕೊಡುವವನಿಲ್ಲದಿದ್ದರೆ ಭವತಿ ಭಿಕ್ಷಾಂದೇಹಿ ಎನ್ನುವವನ ಅಸ್ತಿತ್ವ ಇರುವುದಿಲ್ಲ, ಅಲ್ಲವೇ?  

ನಾನು ಬ್ಯಾಂಕಿನ ಕೆಲಸದ ನಿಮಿತ್ತ ಹೊರಹೋದಾಗ ಜ್ಯೂಸ್ ಕೊಳ್ಳಲು ಹೋಗುವ ಪುಟ್ಟ ಬಕಾಲಾ ಎಂದು ಕರೆಯಲ್ಪಡುವ ಮಿನಿ ಮಾರ್ಕೆಟ್ ಇದೆ. ಅಲ್ಲಿ ಸಾಮಾನ್ಯವಾಗಿ ಇರುತ್ತಿದ್ದ ವ್ಯಕ್ತಿಯೊಬ್ಬ ಕಾಣದೇ ಇದ್ದುದರಿಂದ ವಿಚಾರಿಸಿದೆ. ಆಗ ಅಲ್ಲಿ ಕೆಲಸ ಮಾಡುವ ವ್ಯಕ್ತಿ ಹೇಳಿದ, ಅವರನ್ನು ಜೈಲಿಗೆ ಹಾಕಿದಾರೆ ಎಂದು. ಅರೆ, ಜೈಲಾ, ಅಂಥ ಮನುಷ್ಯ ಅಲ್ಲವಲ್ಲಾ ಈತ ಎಂದು ನನ್ನ ಅನುಮಾನವನ್ನು ವ್ಯಕ್ತ ಪಡಿಸಿದಾಗ ಆತ ಹೇಳಿದ ಪುರಸಭೆಯಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬನಿಗೆ ೨೦೦ ರಿಯಾಲ್ ( ಸುಮಾರು ೨,೭೦೦ ರೂ. ) ಲಂಚ ಕೊಟ್ಟಿದ್ದು ಕಾರಣ ಎಂದು.

ನಮ್ಮ ಕಂಪೆನಿಯ ಮಾಲೀಕರ ಮಿತ್ರರಿಗೆ ಸಂಭವಿಸಿದ್ದು ಇದು. ಸುಮಾರು ಹತ್ತುವರ್ಷಗಳ ಹಿಂದೆ ಸೌದಿ ಅರೇಬಿಯಾದ ಮತ್ತೊಂದು ನಗರವಾದ ದಮ್ಮಾಮಿನ ಬಂದರಿನಲ್ಲಿ ವಿದೇಶದಿಂದ ಆಮದಾಗಿ ಬಂದ ಸರಕನ್ನು ಸ್ವಲ್ಪ ಬೇಗನೆ ಬಿಡಿಸಿ ಕೊಳ್ಳಲು ಅಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗೆ ಲಂಚ ಕೊಟ್ಟರು. ಹತ್ತು ವರ್ಷಗಳ ನಂತರ ಈ ವಿಷಯ ಬೆಳಕಿಗೆ ಬಂದು ಅವರನ್ನು ಕೂಡಲೇ ದೇಶದಿಂದ ಗಡೀ ಪಾರು ಮಾಡಿದರು. ಪಾಕಿಸ್ತಾನ ಮೂಲದ ಈ ವ್ಯಕ್ತಿ ಚಿಕ್ಕ ಆಸಾಮಿ ಅಲ್ಲ. ದಮ್ಮಾಮಿನ ಬಂದರಿನಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ತನಂದೆ ಆದ ಕಂಪೆನಿ ಸಹ ಆರಂಭಿಸಿದ್ದರು. ಏಕಾಯೇಕಿ ಅವರನ್ನು  ಗಡೀಪಾರು ಮಾಡಿತು ಸೌದಿ ಸರಕಾರ. ದಮ್ಮಾಮಿನ ಪಕ್ಕದ ಲ್ಲೇ ಇರುವ ಪುಟ್ಟ ಬಹರೇನ್ ದೇಶದಲ್ಲಿ ಕೂತು ತಮ್ಮ ವಹಿವಾಟನ್ನು ನಿಯಂತ್ರಿಸುತ್ತಿದ್ದಾರೆ. ಹೇಗಿದೆ, ನಮ್ಮ ಕಾನೂನು, ಅರೇಬಿಯಾದ ಸರ್ವಾಧಿಕಾರಿ ಕಾನೂನು? ಇಲ್ಲಿ ಹೊಟ್ಟೆಗೆ ಬಟ್ಟೆಗೆ ಸರಿಯಾಗಿ ಸಿಗುವುದರಿಂದ ಜನರಿಗೆ ಫ್ರೀಡಂ, ಡೆಮಾಕ್ರಸಿ ಇವುಗಳ ಚಿಂತೆ ಇಲ್ಲ. ನಮಗೆ ಫ್ರೀಡಂ ಇದ್ದರೂ ಒಂದು ನಿಸ್ಶಹಾಯಕತೆ, ಕಟ್ಟಿ ಹಾಕಲ್ಪಟ್ಟ ಭಾವ.

ಸರಿ, ಸಮಾಜದ ಎಲ್ಲ ವರ್ಗದವರನ್ನೂ ಯಾವುದೆ ಬೇಧ ಭಾವ ಇಲ್ಲದೆ ಬಾಧಿಸುವ ಈ ಲಂಚಕೋರತನ ದ ವಿರುದ್ಧದ ಹೋರಾಟ ಏಕೆ ಬಿರುಸಾಗಿಲ್ಲ? ಜನ ಏಕೆ ದೊಡ್ಡ ರೀತಿಯಲ್ಲಿ ಭಾಗವಹಿಸುತ್ತಿಲ್ಲ? ಎಲ್ಲೋ ಒಂದೆರಡು ನಗರ ಪ್ರದೇಶಗಳಲ್ಲಿ ಒಂದು ರೀತಿಯ boredom ಕಳೆಯಲೆಂಬಂತೆ ಬಂದ ಒಂದಿಷ್ಟು ಯುವಜನರು. ಅಣ್ಣಾ ಮನವಿಗೆ ಜನ ಕಿವಿಗೊಡದಿರಲು ಕಾರಣ ಭ್ರ್ಹಷ್ಟಾಚಾರದ ಬಗ್ಗೆ ಜನರಿಗೆ ಇರುವ ಪರೋಕ್ಷ ಒಲವು ಕಾರಣ ಇರಬಹುದು. ಯಾವುದೇ ಕೆಲಸ ಕೈಗೆತ್ತಿಕೊಳ್ಳಬೇಕಾದರೂ ಆ ಕೆಲಸದಲ್ಲಿ ನಮಗೆ passion ಎನ್ನುವುದು ಇರಬೇಕು. ardent passion. ಅದು ನಮ್ಮಲ್ಲಿ ಕಾಣಲು ಸಿಗಲಿಲ್ಲ ಈ ಚಳುವಳಿಯಲ್ಲಿ. ಅದೇ ಸಮಯ ನಮಗಿಷ್ಟವಾದ, ಊಟ ನಿದ್ದೆಯನ್ನೂ ತ್ಯಜಿಸಿ ಆಸಕ್ತಿ ತೋರಿಸುವ ಕ್ರಿಕೆಟ್ ಆಟದ ಕಡೆ ನಮ್ಮ ಆಸಕ್ತಿ ಸ್ವಲ್ಪ ನೋಡಿ. ಯಾವುದಾದರೂ ಪಂದ್ಯದಲ್ಲಿ ಭಾರತ ಸೋತರೆ ಪ್ರತೀ ತಿಮ್ಮ, ಬೋರ, ವೆಂಕ ಎಕ್ಸ್ಪರ್ಟ್ ಆಗಿ ಬಿಡುತ್ತಾರೆ. ಥತ್, ನಾಯಕ  ಟಾಸ್ ಗೆದ್ದು ಬ್ಯಾಟಿಂಗ್ ತಗೋ ಬೇಕಿತ್ತು, ನಾವು ಚೇಸ್ ಮಾಡಲು ನಾಲಾಯಕ್ಕು ಅಂತ ಅವ್ನಿಗ್ ಗೊತ್ತಿಲ್ವಾ….ಪಿಚ್ ತುಂಬಾ ಸ್ಲೋ ಆಗೋಯ್ತು…. ಇಬ್ಬರು ಸ್ಪಿನ್ನರ್ ಗಳನ್ನು ಆಡಿಸಬೇಕಿತ್ತು ನೋಡು….. ಅಂಪೈರ್ ಕೈ ಕೊಟ್ಟ……..ಎಲ್ಲಿಂದ ಸಿಕ್ಕುದ್ನೋ ಈ ಕೋಚು?……. D/L ಮೆಥಡ್ ಸರಿಯಿಲ್ಲ, ನಮಗೆ ಅನುಕೂಲ ಆಗ್ಲಿಲ್ಲ ಡಕ್ವರ್ಥ್ ಲೀವೈಸ್ (D/L)……. ವಾವ್, ನೋಡಿದಿರಾ ಜ್ಞಾನವನ್ನು? ಇವರ ಅನಾಲಿಸಿಸ್ ಗಳಿಗೆ ಜೆಫ್ ಬಾಯ್ಕಾಟ್, ಹರ್ಷ ಭೋಗ್ಲೆ ಯಂಥವರು ಹಿಮ್ಮೆಟ್ಟುತ್ತಾರೆ. ಆ ಪಾಟಿ ಜ್ಞಾನ. ಜೀವಮಾನದಲ್ಲಿ ಬ್ಯಾಟ್ ಹಿಡಿದಿರದ, ಪಿಚ್ ಮೇಲೆ ಹೆಜ್ಜೆಯೂರಿಲ್ಲದವರ ಅನಾಲಿಸಿಸ್ಸು ಇದು. ಅದೇ ಸಮಯ ಅಣ್ಣಾ ಹಜಾರೆ ಹೆಸರು ಕೇಳಿದ ಕೂಡಲೇ ಯಾರಪ್ಪಾ ಈ ತಾತ ಎಂದು ಗೂಗ್ಲಿಸಿ ನೋಡುತ್ತಾರೆ. ಕ್ರಿಕೆಟ್ ನ ಗೂಗ್ಲೀ ಬಗ್ಗೆ ಸರಾಗವಾಗಿ ಮಾತನಾಡುವವರು ಅಣ್ಣಾ ಬಗ್ಗೆ ತಿಳಿಯಲು ಗೂಗ್ಲ್ ಮೊರೆ ಹೋಗುತ್ತಾರೆ. ಈಗ ತಿಳಿಯಾಯಿತೆ ಮರ್ಮ? ಲಂಚದ ವಿರುದ್ಧದ ಜನರ ಆಸಕ್ತಿ ನಿರಾಸಕ್ತಿ, ಅನಾದಾರದ ಮರ್ಮ? ಇದೇ passion ತರುವ ಫಲಿತಾಂಶ. ದೇಶವನ್ನು ಕಿತ್ತು ತಿನ್ನುತ್ತಿರುವ ಭ್ರಷ್ಟಾಚಾರದ ಬಗ್ಗೆ ಕ್ರಿಕೆಟ್ ಕಡೆ ತೋರಿಸುವ ಕಿಂಚಿತ್ ಆಸಕ್ತಿಯನ್ನಾದರೂ ಜನ ತೋರಿಸಿದ್ದಿದ್ದರೆ ಬೀದಿಗಳು ಪ್ರತಿಭಟಿಸುವ ಜನರಿಂದ ತುಂಬಿ ಹೋಗುತ್ತಿದ್ದವು.  ಒಂದು ದಿನದ ಕಡ್ಡಾಯ ಓವರ್ಗಳ ಪಂದ್ಯಕ್ಕಾಗಿ ಮೈದಾನ ತುಂಬುವಂತೆ.

ಎರಡನೇ ವಿಶ್ವ ಮಹಾಯುದ್ಧದ ಹೀರೋ ವಿನ್ಸ್ಟನ್ ಚರ್ಚಿಲ್ ಅಂದಿನ ಬ್ರಿಟಿಶ್ ಪ್ರಧಾನಿ ಕ್ಲೆಮೆಂಟ್ ಅಟ್ಲೀ ಯನ್ನು  ಮನವಿ ಮಾಡಿಕೊಂಡ ಭಾರತಕ್ಕೆ ಸ್ವಾತಂತ್ರ್ಯ ಕೊಡಬೇಡ ಎಂದು. ಬಹುಶಃ ಆಳಿಕೊಳ್ಳುವ ಸಾಮರ್ಥ್ಯ ಭಾರತೀಯರಿಗೆ ಇನ್ನೂ ಬಂದಿಲ್ಲ ಎಂದು ಈ ಸಿಗಾರ್ ಪ್ರೇಮಿ ಮುತ್ಸದ್ದಿಗೆ ತೋರಿರಬೇಕು. ಹಳೇ ತಲೆಮಾರಿನ, ವಯಸ್ಸಾದ ಯಾರನ್ನೇ ಹೀಗೇ ಮಾತಿಗೆ ಕೇಳಿ, ಅಯ್ಯೋ ಬ್ರಿಟಿಷರ ಕಾರುಬಾರೆ ಚೆನ್ನಿತ್ತು ಎನ್ನದಿರಲಾರರು. ಈ ಮಾತನ್ನು ಹತಾಶ ಜನರ ಬಾಯಲ್ಲಿ ಹಾಕಿದವರು, ನಮ್ಮ ಖಾದಿಧಾರಿ ರಾಜಕಾರಣಿಗಳು. ಆದರೆ ಪ್ರಜಾ ಪ್ರಭುತ್ವಕ್ಕೆ ಅವರೇ ಜೀವಾಳ. ಶಪಿಸುತ್ತಾ, ರಮಿಸುತ್ತಾ ಅವರೊಂದಿಗೇ ಕಳೆಯಬೇಕು ಕಾಲವನ್ನು ನಾವು ಮತ್ತು ನಮ್ಮ ಪ್ರೀತಿಯ ದೇಶ.

ಅಮ್ಮಾ, ನಾನ್ಹೇಗೆ ಹುಟ್ಟಿದೆ?

ಮಕ್ಕಳ ಹತ್ತು ಹಲವು ಕುತೂಹಲಗಳಲ್ಲಿ ಒಂದು ಮಕ್ಕಳು ಹೇಗೆ ಹುಟ್ಟುತ್ತವೆ ಎಂದು.  ನಾನ್ಹೇಗೆ ಬಂಡೆ ಎನ್ನುವ ಈ ಮಕ್ಕಳ ಪ್ರಶ್ನೆ ನಮ್ಮನ್ನು ತಬ್ಬಿಬ್ಬು ಮಾಡುವುದು ಸಹಜವೇ. ಐದನೇ ಕ್ಲಾಸಿನಲ್ಲಿದ್ದಾಗ ನನ್ನ ಪೋಲಿ ಗೆಳೆಯನೊಬ್ಬ ವಿವರವಾಗಿ ತಿಳಿಸಿ ಹೇಳಿದರೂ ತಂದೆ ತಾಯಿ ಬಗೆಗಿನ ಅಪಾರವಾದ ಗೌರವ ಅವನ ಕಥೆಯನ್ನೂ ನಂಬದಂತೆ ತಡೆದಿತ್ತು. ನಾನು ಅಂದು ಕೊಂಡಿದ್ದು ಮಕ್ಕಳು ಬೇಕೆಂದಾಗ ತಂದೆ ತಾಯಿಗಳು ದೇವರಲ್ಲಿ ಕೇಳಿ ಕೊಳ್ಳುತ್ತಾರೆ ಮತ್ತು ಆ ಕರುಣಾಮಯನಾದ ದೇವರು ಮಕ್ಕಳನ್ನು ಕರುಣಿಸುತ್ತಾನೆ ಎಂದು, ಆದರೆ ಮೇಲೆ ಹೇಳಿದಂಥ ಪೋಲಿ ಪೋಕರಿಗಳು ವಕ್ಕರಿಸಿ ಹಾಗಲ್ಲ ಕಣೋ ಬೆಪ್ಪೆ ಹೀಗೆ ಎಂದು ಸವಿವರವಾಗಿ ಹೇಳಿದಾಗ ಅಪ್ಪ ಅಮ್ಮನ ನನ್ನು ಸಂಶಯ ದಿಂದ ನೋಡುವಂತಾಗುತ್ತಿತ್ತು.

ಈ ಚಿತ್ರ ನೋಡಿ. ಜರ್ಮನಿ ದೇಶದಲ್ಲಿ ಮಕ್ಕಳು ಹೇಗೆ ಬರುತ್ತಾರೆ ಎಂದು ಮಕ್ಕಳಿಗೆ ತಿಳಿ ಹೇಳಲು ಪುಸ್ತಿಕೆಗಳು. ಅದರಲ್ಲಿನ ಒಂದು ದೃಶ್ಯ ನೀವೀಗ ನೋಡುತ್ತಿರುವುದು.

ಅಪ್ಪನಿಗೂ ಒಂದು “ದಿನ”

 
ಇಂದು ಅಪ್ಪನ ದಿನ. ಎಲ್ಲರಿಗೂ ಇರುವಂತೆ ಬಡ ಅಪ್ಪನಿಗೂ ಒಂದು ದಿನ.

ಇಸ್ಲಾಮಿನ ಪವಿತ್ರ ಪ್ರವಾದಿಗಳ ಹತ್ತಿರ ಒಬ್ಬರು ಬಂದು ಕೇಳುತ್ತಾರೆ, ನಾವು ಅತಿ ಹೆಚ್ಚ್ಚು ಗೌರವಿಸಬೇಕಾದ, ಪ್ರೀತಿಸಬೇಕಾದ ವ್ಯಕ್ತಿ ಯಾರು ಎಂದು. ಸುಡು ಮರಳಾರಣ್ಯದಿಂದ ವಿಶ್ವಕ್ಕೆ ಶಾಂತಿ, ಸಮನ್ವತೆಯ ಸಂದೇಶ ತಂದ ಮಹರ್ಷಿ ಹೇಳಿದ್ದು, ನಿನ್ನ ತಾಯಿ ಎಂದು. ನಂತರ ಯಾರು ಎನ್ನುವ ಅವರ ಪ್ರಶ್ನೆಗೆ ಪ್ರವಾದಿ ಹೇಳಿದ್ದು ತಾಯಿ. ಮೂರನೆಯ ಸಲವೂ ಕೇಳಿದಾಗ ತಾಯಿಯೇ ಉತ್ತರ. ಪ್ರವಾದಿಗಳೇ ನಂತರದ ಸರತಿ ಯಾರದು ಎಂದು ಆತ ಹತಾಶೆಯಿಂದ ಕೇಳಿದಾಗ ನಿನ್ನ “ತಂದೆ” ಎಂದರು ಪ್ರವಾದಿ.

ಮತ್ತೊಂದು ಕಡೆ ತಾಯಿಯ ಮಹತ್ವವನ್ನು ವಿವರಿಸುತ್ತಾ ಪ್ರವಾದಿಗಳು ” ಮಾತೆಯ ಕಾಲಿನಡಿಯಲ್ಲಿದೆ  ಮಕ್ಕಳ ಸ್ವರ್ಗ” ಎಂದು ತಾಯ್ತನವನ್ನು ಕೊಂಡಾಡಿದರು.

ಅಮ್ಮ ನೀನು ನಕ್ಕರೇ ನಮ್ಮ ಬಾಳು ಸಕ್ಕರೆ,……
ತಾಯಿ ಸತ್ತ ಮೇಲೆ ತವರಿಗೆ ಎಂದೂ ಹೋಗಬಾರದವ್ವಾ…

ಓಹ್, enough enough, where is dad, where is the father? ಅಪ್ಪನ ದಿನದಲ್ಲೂ ಎಂಥದ್ದು ತಾಯಿಯ ಗುಣಗಾನ ಎನ್ನುತ್ತೀರಾ? ನಿಲ್ಲಿ, ಅಗೋ ನೋಡಿ ಬರುತ್ತಿದ್ದಾನೆ ಅಪ್ಪ. ದಿನವಿಡೀ ಸೌದೆ ಕಡಿದು ಹೆಗಲ ಮೇಲೆ ಕೊಡಲಿಯನ್ನು ಹೊತ್ತು, ಕೈಯಲ್ಲಿ ತನ್ನ ಮಕ್ಕಳಿಗೆ ತಿಂಡಿ ಮತ್ತು ಹೆಂಡತಿಗೆ ಹೂವು ತರುತ್ತಿದ್ದಾನೆ. ರಕ್ತವನ್ನು ಬೆವರಾಗಿಸಿ dog eat dog world ನಲ್ಲಿ ಸೆಣಸಿ ತನ್ನ ಪರಿವಾರವನ್ನು ಸುಖಿಯಾಗಿಡಲು ಅವನು ಪಡುತ್ತಿರುವ ಪಾಡಿಗೆ ಚಿಕ್ಕಾಸಿನ ಬೆಲೆಯಿಲ್ಲ. ತಂದೆ ಎಂದರೆ ದುಡಿಯುವ ಒಂದು ಮೆಶಿನ್ ಅಷ್ಟೇ. ಪೂರ್ಣವಿರಾಮ. 

ಅಪ್ಪ ಎಷ್ಟು ಚಿಕ್ಕ ಚೊಕ್ಕ ಪದ? ಆದರೆ ಅದರ ಹಿಂದಿರುವ ತ್ಯಾಗ, ಕಷ್ಟ ಕಾರ್ಪಣ್ಯ? ಮಕ್ಕಳಾದರೆ ತಾಯಿಗೆ ಕ್ರೆಡಿಟ್. ಹೊತ್ತು ಹೆತ್ತು ಹೊತ್ತು ಸಾಕುತ್ತಾಳಂತೆ. ಅದರ ನಂತರದ ಎಲ್ಲ ಜಂಜಾಟಗಳಿಗೂ ತಂದೆಯೇ ಅಲ್ಲವೇ ಮುಂಚೂಣಿಯಲ್ಲಿ ನಿಂತು ನಿಭಾಯಿಸಬೇಕಾದ್ದು?

ಅಪ್ಪನ ಪಾತ್ರ ಬಹಳಷ್ಟು ಚೈತನ್ಯ, ( takes oodles of energy ), ಬಹಳಷ್ಟು ಬಾಧ್ಯತೆ (takes lots of commitment) ಗಳನ್ನೂ ಬೇಡುತ್ತದೆ. ದಿನವಿಡೀ ದುಡಿದು, ಮೇಲಿನವರಿಂದ, ಯಜಮಾನರಿಂದ ತೆಗಳಿಸಿಕೊಂಡು ಸಪ್ಪೆ ಮುಖದಿಂದ ಕೆಲಸದ ಸ್ಥಳ ಬಿಟ್ಟು ಮನೆಗೆ ಬಂದಾಗ ಆತ ಚೈತನ್ಯದ ಚಿಲುಮೆ ಆಗಬೇಕು ಮಡದಿಗೆ, ಮಕ್ಕಳಿಗೆ.
ನನ್ನ ತಂದೆ world’s best dad. ಮಕ್ಕಳು ಏನನ್ನುತ್ತಾರೋ ಅದು ಸರಿ, ಅವರಿಗೆ ಬೇಕಿದ್ದನ್ನಲ್ಲವನ್ನೂ ಕೊಡಿಸುವ ಯತ್ನ. ದಾರಿ ತಪ್ಪಂದಂತೆ ಅತ್ಯಂತ ಕಟ್ಟುನಿಟ್ಟಾಗಿ ಪ್ರೀತಿಯಿಂದ ಸಾಕಿದ ನನ್ನ ಅಪ್ಪ ಹೊರಗೆ ಎಷ್ಟೇ ಕಷ್ಟವಿದ್ದರೂ ಮಕ್ಕಳೆದುರು ತೋರಿಸುತ್ತಿರಲಿಲ್ಲ. ಒಮ್ಮೆ ಸನಾದಿ ಅಪ್ಪಣ್ಣ ಚಿತ್ರ ನೋಡಿ ಬಂದ ತಂದೆ ಅಮ್ಮನಲ್ಲಿ ಇಷ್ಟೊಂದು ಪ್ರೀತಿಯಿಂದ ಸಾಕಿದ ನಮ್ಮ ಮಗನೂ ಹೀಗೆ ಆಗಿ ಬಿಟ್ಟರೆ ಹೇಗೆ ಎಂದು ಅನುಮಾನಿಸಿದ್ದರು.

ಆದರೆ ಅಪ್ಪನಿಗೆ ದೊಡ್ಡ ನಿರಾಶೆಯನ್ನೇ ಬಡಿಸಿದೆ ನಾನು.

ಈಗ ಎರಡು ಪುಟ್ಟ ಮಕ್ಕಳ ತಂದೆಯಾಗಿರುವ ನಾನು ನನ್ನ ಶ್ರಮ ಮೀರಿ ಪ್ರಯತ್ನಿಸುತ್ತೇನೆ ಒಳ್ಳೆ, ಪ್ರೀತಿಯ, ಮಮತೆಯ ತಂದೆಯಾಗಲು. ನಾನು ಪಡುವ ಪಾಡಿಗೆ ನನಗೆ ನನ್ನ ಮಕ್ಕಳ ಟೈ ಕೊಡುಗೆಯಾಗಲಿ, ಕೈ ಗಡಿಯಾರದ ಉಡುಗೊರೆಯಾಗಲಿ ಬೇಕಿಲ್ಲ. ನನಗೆ ಬೇಕಿರುವುದು ಇಷ್ಟೇ; ಸ್ವಾಭಿಮಾನಿಗಳಾಗಿ ದೇಶಕ್ಕೂ ತಾವು ನಂಬಿದ ಸಂಸ್ಕೃತಿಗೂ ಅಂಟಿಕೊಂಡು ಇವೆರಡಕ್ಕೂ ಕೀರ್ತಿ ತರುವ, ಬೆಳಗುವ ರತ್ನಗಳಾಗಿ ಬಾಳಲಿ ನನ್ನ ಮಕ್ಕಳು ಎಂದು.