ಒಂದು “ಲಾ” ಪ್ರಹಸನ

ಏನ್ ಲಾ…. ಏನಿಲ್ಲ ಕಣ್ಲಾ ; ಇದು ಮೊನ್ನೆ ಮೊನ್ನೆ ನಮ್ಮ ರಾಜ್ಯದಲ್ಲಿ ನಡೆದ ಗದ್ದಲದ ವಿಶ್ಲೇಷಣೆ ಮತ್ತು ಫಲಿತಾಂಶ. ಪತ್ರಕರ್ತರ, ವಕೀಲರ, ಪೊಲೀಸರ ಮಧ್ಯೆ ಜಗಳ ಕಂಡ ನಮ್ಮ ರಾಜ್ಯ ತನ್ನ ಅಪಕೀರ್ತಿಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿತು. ರಂ. ಶ್ರೀ. ಮುಗಳಿಯವರ “ಎಂಥ ನಾಡಿದು, ಎಂಥ ಕಾಡಾಯಿತೋ” ಪರಿತಾಪಕ್ಕೆ ತಕ್ಕಂತೆ ನಡೆದು ಕೊಂಡಿತು ನಮ್ಮ ಪ್ರೀತಿಯ ರಾಜ್ಯ. ಆದರೆ ಈ ಲೇಖನ ಆ ಜಗಳದ ಬಗ್ಗೆ ಅಲ್ಲ. ಇದು ಸ್ವಲ್ಪ ಬೇರೆ ತೆರನಾದುದು. ಮರುಭೂಮಿಯ ಈ “ಲಾ” ನಮ್ಮ ಮೈ ಪರಚಿಕೊಳ್ಳುವಂತೆ ಮಾಡುತ್ತದೆ. ಅಸಹಾಯಕೆಯಿಂದ ಬಸವಳಿಯುವಂತೆ ಮಾಡುತ್ತದೆ. ಯಾವುದೋ ಒಂದು ಹಿಂದಿ ಚಿತ್ರದಲ್ಲಿ ಯಕಃಶ್ಚಿತ್ ಸೊಳ್ಳೆ ನಟ ನಾನಾ ಪಾಟೇಕರ್ ನನ್ನು ನಪುಂಸಕನನ್ನಾಗಿಸಿದಂತೆ; ಸಾಲಾ, ಏಕ್ ಮಚ್ಛರ್, ಆದ್ಮಿ ಕೋ ಹಿಜಡಾ ಬನಾ ದೇತಾ ಹೈ.    

ಅರೇಬಿಕ್ ಭಾಷೆಯ “ಲಾ” ಪದದ ಅರ್ಥ “NO” ಎಂದು. ಈ ಮಾತು ಅರಬ್ ನ ಬಾಯಿಂದ ಬಿತ್ತು ಎಂದರೆ ಅದನ್ನು ಸರಿ ಪಡಿಸಲು ಯಾರಿಂದಲೂ ಸುಲಭ ಸಾಧ್ಯವಲ್ಲ. ನಮ್ಮ ಸಂವಿಧಾನಕ್ಕೆ ತಿದ್ದುಪಡಿ ಬೇಕಾದರೂ ತರಬಹುದು ಈ ಲಾ ಗೆ ತಿದ್ದುಪಡಿ ತರೋದು ಅಸಾಧ್ಯ. ಬ್ಯಾಂಕಿನಲ್ಲಿ, ಪೊಲೀಸ್ ಪೇದೆಯ ಕಯ್ಯಲ್ಲಿ, ಕಸ್ಟಮ್ಸ್ ನಲ್ಲಿ, ಕಚೇರಿಯಲ್ಲಿ, ಎಲ್ಲಿ ಹೋದರೂ ಈ ಪದದ ರುಚಿ ಆಗುತ್ತಲೇ ಇರುತ್ತದೆ. ಮೊನ್ನೆ ನನ್ನ ಮಿತ್ರರೊಬ್ಬರಿಗೆ ಆದ ಅನುಭವ ಇದು.

ದುಬೈ ನಿಂದ ರಿಯಾದ್ ವಿಮಾನ ನಿಲ್ದಾಣಕ್ಕೆ ಇಳಿದು ಕಸ್ಟಮ್ಸ್ ಚೆಕ್ ಗಾಗಿ ಸರತಿಯಲ್ಲಿ ನಿಂತರು ನನ್ನ ಮಿತ್ರರು. ಅವರ ಮುಂದೆ ಫ್ರಾನ್ಸ್ ದೇಶದ ಸೂಟು ಬೂಟು ಧರಿಸಿದ ಬಿಳಿಯ ನಿಂತಿದ್ದ. ದುಬೈ ನಿಂದ ರಿಯಾದ್ transit ಆಗಿ ಪ್ಯಾರಿಸ್ ಹೋಗುವವನಿದ್ದ ಈ ಫ್ರೆಂಚ್ ಪ್ರಜೆ. ಕಸ್ಟಮ್ಸ್ ನಲ್ಲಿ ಅವನ ಸೂಟ್ ಕೇಸನ್ನು ಪರಿಶೀಲಿಸಿದಾಗ ದೊಡ್ಡ ಬಾಟಲಿಯೊಂದು ಅಧಿಕಾರಿಯ ಕಣ್ಣಿಗೆ ಬಿತ್ತು. ಬೆಲೆಬಾಳುವ ಬ್ರಾಂಡಿ ಬಾಟಲಿ. ಬಾಟಲಿಯನ್ನು ಕೈಯ್ಯಲ್ಲಿ ಹಿಡಿದು ಹೊರಳಿಸುತ್ತಾ ಹುಬ್ಬೇರಿಸಿದ ಕಸ್ಟಮ್ಸ್ ಆಫೀಸರ್. ಬಿಳಿಯ ಕಣ್ಣುಗಳನ್ನು ರೋಲ್ ಮಾಡುತ್ತಾ nonchalant ಆಗಿ ಭುಜ ಹಾರಿಸಿದ. clash of culture. ಒಬ್ಬನಿಗೆ ಮದ್ಯ ನಿಷಿದ್ಧ, ಎದುರು ನಿಂತವನಿಗೆ way of life. ಮದ್ಯ ನಮ್ಮ ದೇಶದಲ್ಲಿ ನಿಷಿದ್ಧ ಎಂದು ಆಫೀಸರ್ ಹೇಳಿದಾಗ ಬಿಳಿಯ ಹೇಳಿದ, ನನಗೆ ಗೊತ್ತು, ಆದರೆ ನಾನು ದುಬೈ ನಿಂದ ಬರುತ್ತಿದ್ದೇನೆ, ನನ್ನ ದೇಶಕ್ಕೆ ಹೋಗುವ ದಾರಿಯಲ್ಲಿ ರಿಯಾದ್ ನಲ್ಲಿ ಇಳಿದಿದ್ದೇನೆ ನನ್ನ ವಿಮಾನ ಹೊರಡುವ ತನಕ ಎಂದ. ಆಫೀಸರ್ ಹೇಳಿದ “ಲಾ”. ಬಿಳಿಯ ಹೇಳಿದ ನಾನು ನಿನ್ನ ದೇಶದಲ್ಲಿ ವಾಸಿಸಲೋ, ನೌಕರಿ ಮಾಡಲೋ ಬಂದಿಲ್ಲ, ಟ್ರಾನ್ಸಿಟ್ ಮೇಲೆ ಬಂದಿದ್ದೇನೆ ಎಂದು ವಾದಿಸಿದ. ಆಫೀಸರ್ ಮತ್ತೊಮ್ಮೆ ಗಿಳಿಯಂತೆ ಉಲಿದ “ಲಾ”. ಸಹನೆಯ ಎಲ್ಲೆ ಪರೀಕ್ಷಿಸುತ್ತಿದ್ದ ಆಫೀಸರ್ ನನ್ನು ದುರುಗುಟ್ಟಿ ನೋಡಿದ ಬಿಳಿಯ ಸರಿ, ಅದನ್ನು ನೀನೇ ಇಟ್ಟು ಕೋ, ನನ್ನನ್ನು ಹೋಗಲು ಬಿಡು ಎಂದ. ಅದಕ್ಕೂ ಬಂತು ಉತ್ತರ ‘ಲಾ’. “ನನ್ನ ಧರ್ಮದಲ್ಲಿ ನಾನು ಕುಡಿಯುವಂತಿಲ್ಲ” ಎಂದ ಆಫೀಸರ್. ಅದಕ್ಕೆ ಬಿಳಿಯ ಹೇಳಿದ ನಿನಗೆ ಏನು ಬೇಕೋ ಅದು ಮಾಡು, ಗಾರ್ಬೇಜ್ ಗೆ ಬೇಕಾದರೂ ಎಸೆ, ನನ್ನನ್ನು ಹೋಗಲು ಕೊಡು ಎಂದ ಹತಾಶೆಯಿಂದ. ಆಫೀಸರ್ ಹೇಳಿದ ‘ಲಾ’…..ನಾನು ಈ ಬಾಟಲಿಯನ್ನು ನನ್ನ ಹತ್ತಿರ ಇಟ್ಟುಕೊಂಡು ನಿನ್ನನ್ನು ಕಳಿಸಿದರೆ ನಾನದನ್ನು ಕುಡಿಯುತ್ತೇನೆ ಎಂದು ನೀನು ತಿಳಿಯಬಹುದು. ಪರಚಿಕೊಳ್ಳುತ್ತಾ  ಬಿಳಿಯ ಕೇಳಿದ ನಾನೀಗ ಏನು ಮಾಡಬೇಕು…………? ಆಫೀಸರ್ ಹೇಳಿದ ನೀನು ನನ್ನ ಜೊತೆ ಬರಬೇಕು. ಎಲ್ಲಿಗೆ ಎಂದ ಬಿಳಿಯ. ಟಾಯ್ಲೆಟ್ಟಿಗೆ ಎಂದು ಹೇಳುತ್ತಾ ಟಾಯ್ಲೆಟ್ ಕಡೆ ನಡೆದ ಆಫೀಸರ್. ಬೇರೆ ದಾರಿ ಕಾಣದೇ ಬಿಳಿಯ ಅವನನ್ನು ಹಿಂಬಾಲಿಸಿದ. ಸಾರಾಯಿ ಬಾಟಲಿಯ ಕಾರ್ಕ್ ತೆಗೆದು ಗಟ ಗಟ, ಗಟ ಗಟ ಎಂದು ಆಫೀಸರ್ ಟಾಯ್ಲೆಟ್ ಗುಂಡಿಯ ಗಂಟಲಿಗೆ ಸುರಿದ ಮದ್ಯ. ಬರಿದಾದ ಬಾಟಲಿಯನ್ನು ನುಚ್ಚು ನೂರು ಮಾಡಿ ಅವನ ಕಡೆಗೆ ಒಂದು ಮಂದಹಾಸ ಬೀರಿ ನಡೆದ. ಕ್ಷಣ ಕಾಲ ದಂಗಾಗಿ ನಿಂತು, ಸಾವರಿಸಿಕೊಂಡು ತನ್ನ ಸಾಮಾನುಗಳನ್ನು ಸೂಟ್ ಕೇಸಿನಲ್ಲಿ ತುಂಬಿಸಿ ಕೊಂಡು ಜಾಗ ಖಾಲಿ ಮಾಡಿದ ನತದೃಷ್ಟ ಫ್ರೆಂಚ್ ಪ್ರಜೆ.

ಚಿತ್ರ ಏನು?: ಚಿತ್ರದಲ್ಲಿರುವುದು “ಲಾ” ಕಾರದ ಕಲಿಗ್ರಫಿ (caligraphy) ರೂಪ. ಕಲಿಗ್ರಫಿ ಎಂದರೆ ಸುಂದರ ಬರಹ ಅಂತ. ಅರೇಬಿಕ್ ಭಾಷೆ cursive ಆಗಿರುವುದರ ಕಾರಣ ಕಲಾತ್ಮಕವಾಗಿ  ಹೇಗೆ ಬೇಕಾದರೂ, ಯಾವ ರೂಪದಲ್ಲೂ ಬರೆಯಬಹುದು. ಇದೊಂದು ಜನಪ್ರಿಯ ಕಲೆ. ಕಲಿಗ್ರಫಿ ಗಾಗಿ ವಿಶೇಷ ಪೆನ್ನುಗಳು ಬೇಕಾಗುತ್ತವೆ, ಅದರೊಂದಿಗೆ ಕಲಾವಂತಿಕೆ ಮತ್ತು ಸಂಯಮ ಕೂಡಾ. 

ಚಿತ್ರ ಕೃಪೆ: http://www.oweis.com

ಹೀಗೊಂದು ಕಾನೂನಿನ ಲೈಂಗಿ’ಕಥೆ’

ಜೂಲಿಯಾನ್ ಅಸಾಂಜ್ ಹೆಸರು ಸಾಮಾನ್ಯ ವಿದ್ಯಾವಂತರು ಕೇಳಿರಲೇ ಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ, ಮಾಹಿತಿ ಹಕ್ಕು ಮುಂತಾದ ಹಕ್ಕುಗಳ ಪ್ರತಿಪಾದಕ ಅಸಾಂಜ್. ಈತ ವಿಶ್ವದ ಸರಕಾರಗಳು ತೆರೆಮರೆಯಲ್ಲಿ ನಡೆಸಿ ಮಗುಮ್ಮಾಗಿ ಇದ್ದು ಬಿಡುವ ವಿಷಯಗಳ ಬಗ್ಗೆ ವಿಶ್ವಕ್ಕೆ ಡಂಗುರ ಬಾರಿಸಿ ಹೇಳುತ್ತಿದ್ದ ತನ್ನದೇ ಆದ ವೆಬ್ ತಾಣ “ವಿಕಿಲೀಕ್” ಮೂಲಕ. ಈ ವಿಕಿಲೀಕ್ ಎನ್ನುವ ನಲ್ಲಿ ತೊಟ ತೊಟ ತೊಟ ತೊಟ ಎಂದು ಉದುರಿಸ ಬೇಕಾದ್ದನ್ನೂ, ಉದುರಿಸಬಾರದ್ದನ್ನೂ ಉದುರಿಸಿ ಸರಕಾರಗಳ ಕೆಂಗಣ್ಣಿಗೆ ಕಾರಣವಾಯಿತು. ಈ ನಲ್ಲಿಯ ಬಾಯಿ ಮುಚ್ಚಿಸಲು ಸರಕಾರಗಳು ಎಲ್ಲಾ ಕಸರತ್ತುಗಳನ್ನೂ ಮಾಡಿದವು. ಅದರಲ್ಲಿನ ಒಂದು ಕಸರತ್ತು ಲೈಂಗಿಕ ದೌರ್ಜನ್ಯದ ಅಥವಾ ಅತ್ಯಾಚಾರದ ಆರೋಪ ಜೂಲಿಯಾನ್ ಅಸಾಂಜ್ ವಿರುದ್ಧ.

ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಜೂಲಿಯಾನ್ ಅಸಾಂಜ್ ನಿಗೆ ಇಬ್ಬರು ಮಹಿಳೆಯರ ಪರಿಚಯ ವಾಯಿತು; ಆನ್ನಾ ಆರ್ಡಿನ್ ಮತ್ತು ಸೋಫಿಯಾ ವಿಲೆನ್ ಇವರೇ ಆ ಮಹಿಳೆಯರು.

ಈ ಮಹಿಳೆಯರು ಯಾರು, ಅವರು ಹೇಗೆ ಜೂಲಿಯಾನ್ ಅಸಾಂಜ್ ನಿಗೆ ಹತ್ತಿರವಾದರು ಎನ್ನುವುದು ದೊಡ್ಡ ಕತೆ. ಆನ್ನಾ ಆರ್ಡಿನ್ ಜೂಲಿಯಾನ್ ಒಂದಿಗೆ ಲೈಂಗಿಕ ಚಟುವಟಿಕೆ ನಡೆಸುವಾಗ ಅರ್ಧ ದಾರಿಯಲ್ಲಿ ಕಾಂಡೋಂ ಹರಿದು ಹೋಯಿತು. ಈಗ ಆನ್ನಾ ಗೆ ಶಂಕೆ ತನಗೆ ಲೈಂಗಿಕ ರೋಗ ತಗುಲಿರಬಹುದೋ ಅಥವಾ ಗರ್ಭಧಾರಣೆಯಾಗಿರಬಹುದೋ ಎಂದು. ಆದರೆ ಆಕೆ ಪೊಲೀಸರಿಗೆ ದೂರು ನೀಡಿದ್ದು ಅಸಾಂಜ್ ಉದ್ದೇಶಪೂರ್ವಕ ಕಾಂಡೋಂ ಹರಿದ ಎಂದು.

ಈಗ ಎರಡನೇ ಪಾತ್ರದ ಆಗಮನ, ಸೋಫಿಯಾ ವಿಲೆನ್. ಈಕೆ ಸಹ ಒಂದೆರಡು ದಿನಗಳ ನಂತರ ಅಸಾಂಜ್ ನೊಂದಿಗೆ ಕೂಡಿದಳು. ಮೊದಲ ಸಲ ಕೂಡುವಾಗ ಅಸಾಂಜ್ ಕಾಂಡೋಂ ಧರಿಸಿದ್ದ, ಮರುದಿನ ಬೆಳಿಗ್ಗೆ ಮತ್ತೊಮ್ಮೆ ಕೂಡುವಾಗ ಅಸಾಂಜ್ ಕಾಂಡೋಂ ಅನ್ನು ಧರಿಸಿರಲಿಲ್ಲ ಎಂದು ಸೋಫಿಯಾ ಪೊಲೀಸ್ ಠಾಣೆ ಗೆ ಹೋದಳು ದೂರಲು. ಇಬ್ಬರೂ ಸಮ್ಮತಿಯುಕ್ತ ಸಂಭೋಗಕ್ಕೆ ಒಪ್ಪಿಗೆ ನೀಡಿದ್ದರು ಎಂದು ಅಸಾಂಜ್ ಹೇಳಿದರೆ ಈ ಮಹಿಳೆಯರ ದೂರು ಬೇರೆಯೇ. ಸಮ್ಮತಿ ನೀಡಿದ್ದು ಕಾಂಡೋಂ ರಹಿತ ಸೆಕ್ಸ್ ಗಾಗಿ ಅಲ್ಲ ಎಂದು. ಈಗ ಆಗಮನ ಸೆಕ ನಷ್ಟೇ ರೋಮಾಂಚನ ಕೊಡುವ ಸ್ವಿಸ್ ಕಾನೂನಿಗೆ.

ಸುಸ್ವಾಗತ ಸ್ವಿಟ್ಸರ್ಲೆಂಡ್. ಈ ದೇಶದಲ್ಲಿ ಕಾನೂನು ಸ್ವಿಸ್ ವಾಚಿನಷ್ಟೇ ಸಂಕೀರ್ಣ. ಸುಲಭವಾಗಿ ಅರ್ಥವಾಗೋಲ್ಲ. ಇಲ್ಲಿನ ಕಾನೂನಿನಲ್ಲಿ “ಸರ್ಪ್ರೈಸ್ ಸೆಕ್ಸ್” ಎನ್ನುವ ಕಾಯಿದೆ ಇದೆ. ಈ ನಿಯಮದಡಿ ಲೈಂಗಿಕ ಚಟುವಟಿಕೆಯಲ್ಲಿ ನಿರತರಾಗಿದ್ದಾಗ ಮಹಿಳೆ ಸಾಕು ಎಂದರೂ ಕೇಳದೆ ಮುಂದುವರಿದರೆ ಅದು ಅತ್ಯಾಚಾರ. ಸಂಭೋಗ ನಿರತರಾಗಿರುವಾಗಲೇ ಮಹಿಳೆ ಸಮ್ಮತಿಯನ್ನು ಹಿಂದಕ್ಕೆ ಪಡೆಯಬಹುದಂತೆ. ಸಮ್ಮಿಶ್ರ ಸರಕಾರ ಉರುಳಿಸಲು ಪಕ್ಷವೊಂದು ಸರಕಾರಕ್ಕೆ ಬೆಂಬಲ ಹಿಂದಕ್ಕೆ ಪಡೆಯುವ ಹಾಗೆ. ಹಾಗೇನಾದರೂ ಸಮ್ಮತಿಯನ್ನು ಹಿಂದಕ್ಕೆ ಪಡೆದೂ ಗಂಡು ಮುಂದುವರಿದರೆ ಅದು ಅತ್ಯಾಚಾರ. (ಒಂದು ಸಂಶಯ; ಸಂಭೋಗ ನಿರತ ಗಂಡು ಕಿವುಡನಾದರೆ?) ಕಿವುಡನಾದರೆ ಸಂವಿಧಾನಕ್ಕೆ ತರುವ ತಿದ್ದುಪಡಿ ಯಂತೆ ಈ ಹಾಸ್ಯಾಸ್ಪದ ಸ್ವಿಸ್ law (lessness) ಗೂ ತರಬೇಕು ತಿದ್ದು ಪಡಿಯೊಂದ. ಮಹಿಳೆ ಉಪಯೋಗಿಸುವ withdrawal method ಇದು. withdrawal method ಏನು ಎಂದು ವಿವರಿಸಲು ಇದು ಸೆಕ್ಸ್ ಲೇಖನ ಅಲ್ಲ.

ಮೇಲಿನ ಈ ಕಾನೂನಿನ ಅಡಿ ಅಸಾಂಜ್ ನನ್ನು ಕಟಕಟೆಯಲ್ಲಿ ನಿಲ್ಲಿಸುವ, ತದನಂತರ ಜೈಲಿಗೆ ಅಟ್ಟುವ ಪ್ರಯತ್ನ ಸ್ವಿಸ್ ಸರಕಾರದ್ದು.

ಮರುಭೂಮಿಯ ಎಲೆಮರೆಕಾಯಿ

ವಾರಾಂತ್ಯವಾದ್ದರಿಂದ ಮೊನ್ನೆ ಗುರುವಾರ ಜೆಡ್ಡಾ ದಿಂದ ೪೦೦ ಕಿ. ಮೀ ದೂರ ಇರುವ ಮದೀನಾ ನಗರಕ್ಕೆ ಹೊರಟೆವು ಪರಿವಾರ ಸಮೇತ. ಮಧ್ಯಾಹ್ನ ಬುತ್ತಿ ಕಟ್ಟಿಕೊಂಡು ( ಇಲ್ಲಿ ರಸ್ತೆಗೆ ತಾಗಿದ ಮರಳುಗಾಡಿನಲ್ಲಿ ಕಂಬಳಿ ಹಾಸಿ ಕೂತು ತಿನ್ನುವುದು ಒಂದು ರೀತಿಯ ಮೋಜು, ನಮ್ಮಲ್ಲಿನ ತೋಟದಲ್ಲಿ ಊಟದ ಥರ ) ಹೊರಟೆವು. ನಗರದ ಪರಿಮಿತಿ ಬಿಟ್ಟು ಸ್ವಲ್ಪ ದೂರ ಬರುತ್ತಲೇ ತಪಾಸಣಾ ನಿಲುಗಡೆ. ಸೌದಿ ಅರೇಬಿಯಾದಲ್ಲಿ ಎಲ್ಲಿ ನೋಡಿದರೂ ತಪಾಸಣೆಯೇ. ನಗರದ ಗಡಿ ಬಿಟ್ಟಾಗ, ಬೇರೆ ನಗರ ಪ್ರವೇಶಿಸುವಾಗ, ಇವೆರೆಡರ ನಡುವೆ random ಆಗಿ patrol ಮಾಡುವ ಪೋಲೀಸರ ತಪಾಸಣೆ ಅಲ್ಲಲ್ಲಿ. ೧೯೯೦ ರ ಕೊಲ್ಲಿ ಯುದ್ಧಾ ನಂತರ ಇಲ್ಲಿನ ಅರಸು ಮನೆತನಕ್ಕೆ ಮುನಿದು ಅಲ್ ಕೈದಾ ನಡೆಸಿದ ಕೆಲವು ಭಯೋತ್ಪಾದಕ ಚಟುವಟಿಕೆಗಳ ನಂತರ ಹೆಚ್ಚಿನ ಬಂದೋಬಸ್ತು. ಈಗ ಈ ದೇಶ ತುಂಬಾ ಸುರಕ್ಷಿತ. ಸರಿ ತಪಾಸಣಾ ನಿಲುಗಡೆ ಸಮೀಪಿಸುತ್ತಲೇ ನಾನು ಕಾರನ್ನು ನಿಧಾನಗೊಳಿಸಿ ಕಿಟಕಿಯ ಗಾಜನ್ನು ಇಳಿಸಿದೆ. ನನ್ನತ್ತ ನೋಡಿದ ಸುಮಾರು ಇಪ್ಪತ್ತರ ಚಿಗುರು ಮೀಸೆಯ ಮಂದಸ್ಮಿತ ಪೋಲಿಸ್ ಕೇಳಿದ ನಾನು ಯಾವ ದೇಶದವನೆಂದು. ನಾನು ಭಾರತೀಯ ಎಂದು ಹೇಳುತ್ತಿದ್ದಂತೆಯೇ ಆಹ್, ಹಿಂದಿ ಎನ್ನುತ್ತಾ ಸ್ವಾಗತ (ಮರ್ಹಬ) ಎಂದು ಅರಬ್ಬಿಯಲ್ಲಿ ಹೇಳಿ ನನ್ನ ಗುರುತು ಚೀಟಿ ಮತ್ತು ವಾಹನ ಚಾಲನಾ ಪರವಾನಗಿಯನ್ನು ತೆಗೆಯಲು ಬಿಡದೆ ಮುಂದೆ ಹೋಗಲು ಬಿಟ್ಟ. ಭಾರತೀಯರಿಗೆ ಅರಬರು ಹಿಂದಿ ಎಂದು ಕರೆಯತ್ತಾರೆ. ಹಿಂದ್ ದೇಶದವ ಎಂದರ್ಥ. ಕೆಲವು ಪಂಡಿತರ ಪ್ರಕಾರ ಹಿಂದೂ ಶಬ್ದ ಮೂಲವೂ ಅದೇ. ಅದೇ ಪದದಿಂದಲೇ ಹಿಂದೂ ಎನ್ನುವ ಪದವೂ ಬಂದಿದ್ದು. ಭಾರತೀಯರ ಮೇಲಿನ ಪೋಲಿಸ್ ಪೇದೆಯ ನಂಬುಗೆ ನೋಡಿ ನನಗೆ ಭಾರತೀಯನಾಗಿ ಹುಟ್ಟಿದ್ದು ಧನ್ಯ ಎನ್ನಿಸಿತು. ಈ ಮರ್ಯಾದೆ, ಆತಿಥ್ಯ  ಭಾರತದಲ್ಲೂ ನನಗೆ ಸಿಗಲಿಕ್ಕಿಲ್ಲವೇನೋ? ಭಾರತೀಯರು ತಮ್ಮ ದೇಶದ ಒಳಗೆ ಜಾತಿ ಧರ್ಮ, ಭಾಷೆ ಎಂದು ಹೇಗಾದರೂ ಕಚ್ಚಾಡಿಕೊಳ್ಳಲಿ, ಸಾಗರೋಲ್ಲಂಘನ ಅಥವಾ ಸೀಮೋಲ್ಲಂಘನ ಮಾಡಿದ ಕೂಡಲೇ ನಮ್ಮ identity ಎಲ್ಲಿ ಹೋದರೂ ಒಂದೇ. identical. ಭಾರತೀಯ. Indian. ಪೂರ್ಣ ವಿರಾಮ.

 ಭಾರತೀಯತೆಯೇ ಗುಣ, ಬಾಕಿ ಎಲ್ಲಾ ಗೌಣ.

 ಬೇರಾವುದೇ ದೇಶದವರನ್ನು ಕಂಡರೂ, ವಿಶೇಷವಾಗಿ ಪಾಕಿ, ಆಫ್ಘನ್ ರನ್ನು ಕಂಡರಂತೂ ಪೊಲೀಸರಿಗೆ ದೊಡ್ಡ ಕೆಲಸ. ಬರೀ ಅವರ ಕಾಗದ ಪತ್ರ, ಜಾತಕವಲ್ಲ, ವಾಹನವನ್ನೂ ಕೆಳಗೆ ಮೇಲೆ ಎಂದು ಕನ್ನಡಿ ಹಿಡಿದು ಪರೀಕ್ಷಿಸಿ ಮುಂದೆ ಬಿಡುತ್ತಾರೆ. ಅಂಥ reputation ಅವರದು. ಹೊಡಿ ಬಡಿ ಕಡಿ ಎಂದರೆ ಇವರುಗಳು ಮುಂದೆ. ಹೆಚ್ಚು ಮಾತನಾಡಿದರೆ ಪೇದೆಯನ್ನೂ ತದುಕಲು ಹೆದರುವುದಿಲ್ಲ. ಹಾಗಾಗಿ ಇವರಿಗೆ ತಪಾಸಣಾ ಸ್ಥಳಗಳಲ್ಲಿ ವಿಶೇಷ ಮನ್ನಣೆ ಮತ್ತು ಮಣೆ. ವಿಷದ ಹಲ್ಲು ಇಲ್ಲ ಎಂದು ಚೆನ್ನಾಗಿ ಖಾತ್ರಿ ಪಡಿಸಿಕೊಂಡ ನಂತರವೇ ಹಸಿರು ನಿಶಾನೆ ಮುಂದೆ ಹೋಗಲು. ಆದರೆ ಭಾರತೀಯ ಹಾಗಲ್ಲ, ತಾನಿರುವ ನಾಡಿನ ಕಾನೂನಿಗೆ ತಲೆಬಾಗಿ ಇರುವಷ್ಟು ದಿನ ಯಾವ ತಕರಾರುಗಳಿಗೂ ಹೋಗದೆ ಎಲೆಮರೆಕಾಯಿಯಂತೆ ತನ್ನ ಪಾಡಿಗೆ ದುಡಿದು ದಣಿದು ಬಂದು ರೂಮಿನಲ್ಲಿ ತನ್ನ ಪ್ರೀತಿ ಪಾತ್ರರ ಭಾವ ಚಿತ್ರಗಳನ್ನು ನೋಡುತ್ತಾ ಮುದುಡಿ ಬಿದ್ದಿರುತ್ತಾನೆ ತನ್ನ ನಾಡಿನ ಕನಸನ್ನು ಕಾಣುತ್ತಾ.  

 ಈ ದೇಶದ ಬಿಗಿಯಾದ ಕಾನೂನಿನ ಬಗ್ಗೆ ಒಂದೆರಡು ಮಾತುಗಳನ್ನೂ ಹೇಳುತ್ತೇನೆ, ಮತ್ತು ಇಂಥವನ್ನು ನಾವೂ ಅಳವಡಿಸಿಕೊಂಡರೆ ಮುಂಬೈಯಲ್ಲಿ ಪಾಕಿ ಪಾತಕಿಗಳು ನಡೆಸಿದ ನರಸಂಹಾರದಂಥ ಘಟನೆಗಳು ಮರುಕಳಿಸದಂತೆ ತಡೆಗಟ್ಟಬಹುದು. ಈ ದೇಶಕ್ಕೆ ಉದ್ಯೋಗಕ್ಕಾಗಿ ಬರುವ ಪ್ರತಿಯೊಬ್ಬನೂ ತನ್ನ ಪಾಸ್ ಪೋರ್ಟನ್ನು ತನ್ನ ಯಜಮಾನನಿಗೆ (employer) ಒಪ್ಪಿಸಿ ಅದರ ಬದಲಿಗೆ “ಇಕಾಮ” ಎಂದು ಕರೆಯಲ್ಪಡುವ ಗುರುತಿನ ಕಾರ್ಡನ್ನು ಪಡೆಯಬೇಕು. ಈ ಕಾರ್ಡನ್ನು ತಾನು ತನ್ನ ರೂಮನ್ನು ಬಿಟ್ಟು ಎಲ್ಲೇ ಹೋದರೂ ಜೊತೆಗೇ ಒಯ್ಯಬೇಕು. ಅಲ್ಲಲ್ಲಿ ನಡೆಯುವ random ತಪಾಸಣೆಗಳಲ್ಲಿ ಗುರುತು ಚೀಟಿ ಇಲ್ಲದ್ದನ್ನು ಕಂಡರೆ ಯಾವುದೇ ಸಮಜಾಯಿಷಿಗೂ ಕಿವಿಗೊಡದೆ ಒಳಗೆ ತಳ್ಳುತ್ತಾರೆ. ಚೀಟಿಯನ್ನು ತಂದ ನಂತರವೆ ಬಿಡುಗಡೆ. ಹಜ್ ಸಮಯದಲ್ಲಿ ತಪಾಸಣೆ ಸ್ವಲ್ಪ ಜೋರು. ಯಾತ್ರಾರ್ಥಿಯಾಗಿ ಬಂದು ಮರಳಿ ತಮ್ಮ ದೇಶಕ್ಕೆ ವಾಪಸು ಹೋಗದೆ ದುಡಿಯಲು ಇಲ್ಲೇ ಉಳಿದು ಕೊಳ್ಳುವ ಜನರು ಅಸಂಖ್ಯ. ಅವರಲ್ಲಿ ಬಡ ರಾಷ್ಟ್ರಗಳ ಅರಬರು ಮತ್ತು ಆಫ್ರಿಕನ್ನರು ಹೇರಳ. ಹೀಗೆ ಅಕ್ರಮವಾಗಿ ಉಳಿದು ಕೊಳ್ಳುವ ಯಾವ ದೇಶದವನೇ ಆಗಲಿ, ಮುಸ್ಲಿಮನೇ ಆಗಿರಲಿ ಯಾವ ರಿಯಾಯ್ತಿಯೂ ಇಲ್ಲ. forced deportation.  

 ಮೇಲೆ ಹೇಳಿದ ಮದೀನಾ ಹೋಗುವ ದಾರಿಯಲ್ಲಿನ  ತಪಾಸಣೆ ಮುಗಿದ ಕೂಡಲೇ, ದೇವನೊಬ್ಬನೇ ಆರಾಧನೆಗೆ ಅರ್ಹ ಎಂದು ವಿಶ್ವ ಕೇಳುವಂತೆ ಮೊಳಗಿಸಿ, ಸಮಾನತೆಯ ಕಹಳೆ ಊದಿದ ಮರಳುಗಾಡಿನ ನಿರಕ್ಷರಕುಕ್ಷಿ, ಸಂಪತ್ತು, ಕೀರ್ತಿ ನಶ್ವರ, ದೈವಭಕ್ತಿ, ಸನ್ನಡತೆಯೇ ಶಾಶ್ವತ ಎಂದು ಜಗಕ್ಕೆ ಹೇಳಿ ಕೊಟ್ಟ ಮಹಾ ಪ್ರವಾದಿಯ ಪ್ರೀತಿಯ ಪಟ್ಟಣದ ಕಡೆ ಕಾರು ಸಾಗುತ್ತಿದ್ದಂತೆ ನನಗೊಂದು ಕರೆ ಬಂದಿತು. ನಮ್ಮ ಕಂಪೆನಿಯಲ್ಲಿ ಕೆಲಸ ಮಾಡುವ store assistant ನನ್ನು ಗುರುತು ಚೀಟಿ ಇಲ್ಲದೆ ತನ್ನ ರೂಮಿನ ಹೊರಗಿನ browsing center ಹತ್ತಿರ ಅಡ್ಡಾಡುತ್ತಿದ್ದ ಎಂದು ಪೊಲೀಸರು ಬಂಧಿಸಿದರು ಎಂದು ಸುದ್ದಿ. ಜೆಡ್ಡಾ ಬಿಟ್ಟು ತುಂಬಾ ದೂರ ಬಂದಿದ್ದರಿಂದ ನಾನು ನಮ್ಮ ಮಾನವ ಸಂಪನ್ಮೂಲ ವಿಭಾಗದ ಸೌದಿಗೆ ಫೋನಾಯಿಸಿ ವಿಚಾರಿಸಲು ಹೇಳಿದೆ. ಸೌದಿಯ ವಿವರಣೆಗೂ ಪೊಲೀಸರು ಜಪ್ಪಯ್ಯ ಎನ್ನಲಿಲ್ಲ. ಕೊನೆಗೆ ಬಹಳಷ್ಟು ಮನವಿಯ ನಂತರವೇ ಆತನನ್ನು ಅವರು ಬಿಟ್ಟಿದ್ದು. ಹಿಡಿಯಲ್ಪಟ್ಟವನು ಮುಸ್ಲಿಂ ಮಾತ್ರವಲ್ಲ, ಪೊಲೀಸರು ಮರ್ಯಾದೆ ಕೊಡುವ, ಗೌರವಿಸುವ ವಿಶ್ವಾಸಿಗಳು ಬಿಡುವ  ದೊಡ್ಡ ಗಡ್ದವನ್ನೂ ಹುಲುಸಾಗಿ ಬೆಳೆಸಿದ್ದ. ಊಹೂಂ, ಚೀಟಿ ಇಲ್ಲವೋ ನಡಿ ಮಾವನ ಮನೆಗೆ ಎಂದರು ಪೊಲೀಸರು. ಧರ್ಮ, ಜಾತಿ ಎಲ್ಲಾ ಆಮೇಲೆ. ಈ ಗುರುತಿನ ಚೀಟಿಯ ನಿಯಮ ಬರೀ ವಿದೇಶೀಯರಿಗೆ ಮಾತ್ರವಲ್ಲ, ಸೌದಿ ಗಳೂ “ಬುತಾಕ” ಅಥವಾ “ಹವ್ವಿಯ್ಯ” ಎನ್ನುವ ಕಾರ್ಡನ್ನು ಹೊಂದಿರಲೇಬೇಕು. ಬ್ಯಾಂಕಿನಲ್ಲಿ ಹಣ ಪಾವತಿಸುವಾಗಲಾಗಲಿ, ಬೇರೆ ಯಾವುದೇ ಕಾರ್ಯಗಳಿಗೂ ಮೊದಲಿಗೆ ಕಾರ್ಡ್ ನ ದರ್ಶನ ಆಗಬೇಕು, ಇಲ್ಲದಿದ್ದರೆ ಕಾನೂನಿನ ದುರ್ದರ್ಶನ. ನಾನು ಮನೆಯಲ್ಲಿ ಮರೆತೆ, ಅತ್ತೆ ಮನೆಯಲ್ಲಿ ಬಿಟ್ಟು ಬಂದೆ ಹಾಗೆ ಹೀಗೆ ಎಂದು ಕತೆಗಳನ್ನ ನೇಯ್ದರೆ ಅವು ನಮ್ಮ ಕಿವಿಗಳಿ ಗೇ ಇಂಪು. ಕೇಳಿಸಿಕೊಳ್ಳುವವನ ಕಿವಿಗಲ್ಲ. ಎಷ್ಟೋ ಜನ ಸೌದಿಗಳು ಗೊಗರೆಯುವುದನ್ನು  ನೋಡಿದ್ದೇನೆ, ನಾನು ಕಾರ್ಡನ್ನು ಮರೆತು ಬಂದೆ, ನನ್ನ ಕೆಲಸ ಮಾಡಿ ಕೊಡು ಎಂದು. ಕೇಳುವವರು ಬೇಕಲ್ಲ.  ನಮ್ಮ ದೇಶದಲ್ಲೂ ಇಂಥ ಒಂದು ಕಟ್ಟುನಿಟ್ಟಿನ ವ್ಯವಸ್ಥೆ ಇರಬೇಕು. ಎಷ್ಟೇ ಹಣ ಖರ್ಚಾದರೂ ಭಾರತದ ಪ್ರತೀ ಪೌರನಿಗೆ ಒಂದು ಗುರುತು ಚೀಟಿಯನ್ನು ಹೊಂದಿಸಲೇ ಬೇಕು.

 ಅಕ್ರಮವಾಗಿ ನಮ್ಮ ಗಡಿ ಹಾರಿ ಬರುವ ನೇಪಾಳಿ ಮತ್ತು ಇತರೆ ದೇಶಗಳ ಜನರನ್ನು ತಡೆಯಲು ಇದೇ ಮಾದರಿಯ ಕಾರ್ಡು ಮತ್ತು ತಪಾಸಣೆ ನಮಗಿರಬೇಕು. ಅದಕ್ಕೆ ತಗಲುವ ಖರ್ಚು ದುಂದು ಖರ್ಚಲ್ಲ.  ದೇಶದ ಗಡಿ, ಜನ ಸುರಕ್ಷಿತವಾಗಿರಬೇಕೆಂದರೆ ನಾವು ನಿಷ್ಟುರರಾಗಿರಬೇಕು. ನಮ್ಮ ಒಳ್ಳೆಯತನವನ್ನು, ಹೃದಯ ವೈಶಾಲ್ಯತೆಯನ್ನು  ದೇಶದ ಒಳಗೆ ನೆಲೆಸಿ ಕೊಂಡಿರುವ ಸಹ ಭಾರತೀಯರಿಗೆ ಮಾತ್ರ ಮೀಸಲಿಟ್ಟರೆ ಸಾಕು.