ತರಕಾರೀ ಅಂಗಡಿಯಲ್ಲಿ ವಯಾಗ್ರಾ

ಔಷಧ ತಯಾರಿಕಾ ಕಂಪೆನಿಗಳು ಕೋಟಿಗಟ್ಟಲೆ ಡಾಲರ್ ಖರ್ಚಿನಲ್ಲಿ ಹೊಸ ಹೊಸ ಮದ್ದುಗಳ ಅವಿಷ್ಕಾರಕ್ಕೆ ಅವಿರತ ಶ್ರಮ ವಹಿಸುತ್ತಾರೆ. ಮಾಡರ್ನ್ ಲೈಫ್ ಗೆಂದೇ ಹೇಳಿಮಾಡಿಸಿದ ಮಾಡರ್ನ್ ಖಾಯಿಲೆ, ಬ್ಯಾನೆಗಳು ಈ ಕಂಪೆನಿಗಳಿಗೆ ಒಂದು ರೀತಿಯ ಸುಗ್ಗಿಯನ್ನೇ ದಯಪಾಲಿಸುತ್ತವೆ. ಆದರೂ ಯಾರೂ ಹೊಸತಾಗಿ ಮಾರುಕಟ್ಟೆಗೆ ಬಂದ ಔಷಧಿಗಳ ಕಡೆ ಗಮನ ಕೊಡೋಲ್ಲ, ಮಾತ್ರವಲ್ಲ ಈ ಔಷಧಿಗಳಿಗೆ ಪತ್ರಿಕೆಯಲ್ಲಿ ಪ್ರಚಾರ ಕೂಡಾ ಕಡಿಮೆಯೇ. ಆದರೆ ಒಂದು ಔಷಧವಂತೂ ಇಡೀ ಪ್ರಪಂಚದ ಗಮನವನ್ನು ತನ್ನ ಕಡೆ ನಿರಾಯಾಸವಾಗಿ ಎಳೆದುಕೊಂಡಿತು. Pfizer ಎನ್ನುವ ಕಂಪೆನಿ ದಶಕಗಳ ತನ್ನ ಸಂಶೋಧನೆಗೆ ಒಂದು ತಕ್ಕುದಾದ, ಖಜಾನೆ ತುಂಬಿ ತುಳುಕುವ ಮದ್ದನ್ನು ವಿಶ್ವಕ್ಕೆ ನೀಡಿತು. ವಿಶ್ವ ಅಂದ್ರೆ ಗಂಡಿನ ವಿಶ್ವಕ್ಕೆ ಅನ್ನಿ. ಏಕೆಂದರೆ ಈ ಮದ್ದು ಗಂಡಿಗಾಗಿ.. ಅವನ ರಾಸಲೀಲೆ, ಮತ್ತು ನೀರವ ರಾತ್ರಿಯ ಪಫಾರ್ಮನ್ಸ್ ವೃದ್ಧಿಸಲು, ತಾತ್ಕಾಲಿಕ ನಪುಂಸಕತೆ ಯನ್ನು ಹೋಗಲಾಡಿಸಲು ಇಳಿವಯಸ್ಸಿನವರಿಗೂ ಉಪಯೋಗವಾಗುವ ಮದ್ದನ್ನು ಮಾರುಕಟ್ಟೆಗೆ ಭಾರೀ ಸುದ್ದಿಯೊಂದಿಗೆ ತಂದಿತು. ಫೈಜರ್ ಕಂಪೆನಿ ಎಂದ ಕೂಡಲೇ ನೀವು ಊಹಿಸಿ ಬಿಟ್ಟಿರಿ. ಅದು…..ಅದು….ವಯಾಗ್ರ ಎಂದು, ಅಲ್ಲವೇ? ಫೈಜರ್ ಮತ್ತು ವಯಾಗ್ರ, ಕೋಲ್ಗೆಟ್ ಮತ್ತು ಹಲ್ಲುಜ್ಜುವ ಪೇಸ್ಟ್ ಗೆ ಇರೋ ಸಂಬಂಧ. ಯಾವುದೇ ಪೇಸ್ಟ್ ಖರೀದಿಸಿದರೂ ಅದು ಕೋಲ್ಗೆಟ್ ಎನ್ನುವಷ್ಟು ಆ ಕಂಪೆನಿಯ ಖ್ಯಾತಿ.

ವಯಾಗ್ರಾ. ಈ ವಜ್ರಕಾರದ, ನೀಲಿ ಬಣ್ಣದ ಮಾತ್ರೆ ಒಂದು ದೊಡ್ಡ ಕ್ರಾಂತಿಯನ್ನೇ ಮಾಡುತ್ತಿರಬೇಕು ಶಯನ ಗೃಹದಲ್ಲಿ. ಅನುಮಾನ ಏಕೆಂದರೆ ನಾನು ಅದನ್ನು ಉಪಯೋಗಿಸಿಲ್ಲ. ಅದರ ಅವಶ್ಯಕತೆ ಇನ್ನೂ ಬಂದಿಲ್ಲ ಎನ್ನಿ, ಹಿ..ಹೀ. ಜನ ಮುಗಿ ಬಿದ್ದು ಕೊಳ್ಳ ತೊಡಗಿದರು. ಉತ್ತರ ಧ್ರುವದಿಂ..ದಕ್ಷಿಣ ಧ್ರುವಕೂ…ಮಿಲನದ ಗಾಳಿ ಬೀಸ ತೊಡಗಿತು. ಬೆಲೆ ದುಬಾರಿಯಾದರೂ, ಅಯ್ಯೋ ಸತ್ಮೇಲ್ ಏನು ಗಂಟು ತಗೊಂಡ್ ಹೋಗ್ತೀವಾ ಎಂದು ಜನ ಗಂಟನ್ನು ಬಿಚ್ಚಿದರು. ವಯಾಗ್ರ ಔಷಧ ತಯಾರಿಕಾ ವಲಯದಲ್ಲಿ ಒಂದು ಬಿರುಗಾಳಿಯನ್ನೇ ಎಬ್ಬಿಸಿತು.

ದೇವರು ಈ ಪ್ರಪಂಚವನ್ನು ಸೃಷ್ಟಿಸುವಾಗ ಸಾಕಷ್ಟು ತಯಾರಿ ಮಾಡಿ ಕೊಂಡೆ ಸೃಷ್ಟಿಸಿರುತ್ತಾನೆ. ಮನುಷ್ಯನಿಗೆ ಬೇಕಾದ ಎಲ್ಲಾ ಸವಲತ್ತುಗಳೂ ಈ ಸೃಷ್ಟಿಯಲ್ಲಿವೆ. ನೋಡುವ, ಕಂಡು ಕೊಳ್ಳುವ ಕಣ್ಣು ಬುದ್ಧಿ ಶಕ್ತಿ ಬೇಕಷ್ಟೇ. ಆಹಾರದಲ್ಲೇ ವಿವಿಧ ಪೋಷಕಾಂಶಗಳ ಜೊತೆ ಲೈಂಗಿಕ ಚಟುವಟಿಕೆಗೆ ಬೇಕಾದ ಪೋಷಕಾಂಶಗಳೂ ಇವೆ. ಕೆಲವು ಅಗ್ಗದ ಬೆಲೆಯಲ್ಲಿ ಸಿಕ್ಕರೆ, ಕೆಲವು ದುಬಾರಿ. ತರಕಾರಿ ಅಂಗಡಿಯಲ್ಲೇ ಮಗುಮ್ಮಾಗಿ ಕೂರುವ ತರಕಾರಿಯೊಂದು ರಾತ್ರಿಯ ಬದುಕಿಗೆ ಬಣ್ಣ ತರುತ್ತದಂತೆ. ಅದೇ ನಮ್ಮ ಕೆಂಬಣ್ಣದ ಬೀಟ್ರೂಟು.

ಬೀಟ್ರೂಟಾ??????????????????????

ಹೌದು ಬೀಟ್ರೂಟ್. ಈ ತರಕಾರಿಯಲ್ಲಿ ಬೋರಾನ್ (boron), ಎನ್ನುವ ಪೋಷಕಾಂಶ ಸಂತಾನ ವೃದ್ಧಿಗೆ ಬೇಕಾದ ಲೈಂಗಿಕ ಹಾರ್ಮೋನ್ ಗಳ ಉತ್ಪಾದನೆಗೆ ಉತ್ತೇಜನ ಕೊಡುತ್ತದಂತೆ. ವಯಾಗ್ರ ಮಾಡುವ ಕೆಲಸವನ್ನೇ ಈ ಪಾಪದ ಬೀಟ್ರೂಟ್ ಮಾಡೋದು. ನಮಗೆ ಅದು ಹೊಳಯಲೇ ಇಲ್ವಲ್ಲಾ? ನಿಲ್ಲಿ, ನಿಲ್ಲಿ…

….ಚೆನ್ನಾಗೇ ತಿನ್ನಿ ಬೀಟ್ರೂಟ್ ನ.ಆದರೆ ಮೂತ್ರ ವಿಸರ್ಜನೆಗೆ ಹೋದಾಗ ಮೂತ್ರ ತಿಳಿ ರಕ್ತ ವರ್ಣದ್ದು ಎಂದು ಕಂಡ ಕೂಡಲೇ ಅಯ್ಯಪ್ಪೋ, ತಗುಲಿತಾ ನನಗೂ ಕಿಡ್ನಿ ಕಾಯಿಲೆ ಎಂದು ಡಾಕ್ಟರ್ ಕಡೆ ಧಾವಿಸಬೇಡಿ. ಬೀಟ್ರೂಟ್ ತಿಂದ ನಂತರ ಮೂತ್ರ ವಿಸರ್ಜನೆ ಬೀಟ್ರೂಟ್ ಬಣ್ಣ ಪಡೆದು ಕೊಳ್ಳೋದು ಪ್ರಕೃತಿ ನಿಯಮ.

ಸೋ, ಗುಡ್ ಲಕ್ ವಿದ್ ಬೀಟ್ರೂಟ್.

ಭೂತ ಚೇಷ್ಟೆ ಮತ್ತು ಕಾಮ ಚೇಷ್ಟೆ

ಭೂತ ಚೇಷ್ಟೆ ಮತ್ತು ಕಾಮ ಚೇಷ್ಟೆ. ತನ್ನ ಮನೆಯಲ್ಲಿ ಭೂತ ಚೇಷ್ಟೆ ಎಂದು ಅನುಮಾನ ಪಟ್ಟ ಮನೆಯ ಯಜಮಾನ ಖಾತ್ರಿ ಪಡಿಸಲು ಕ್ಯಾಮರ ಅಳವಡಿಸಿದ ತನ್ನ ಮನೆಗೆ. ಭೂತ ಬಂತೋ, ಸಿಕ್ಕಿತೋ ಗೊತ್ತಿಲ್ಲ ಆದರೆ ಕಾಣಲು ಸಿಕ್ಕಿದ್ದು ಮಾತ್ರ ಎದೆ ಧಸಕ್ಕೆನ್ನುವ ಚಿತ್ರ. ತನ್ನ ಪ್ರೇಯಸಿ ಹದಿ ಹರೆಯದ ತನ್ನ ಮಗನೊಂದಿಗೆ ಚೆಲ್ಲಾಟವಾಡುವ steamy scene ಕಾಣಲು ಸಿಕ್ಕಿತು ಈ ಪಡಪೋಶಿಗೆ. ಮಲತಾಯಿ ಮತ್ತು ಮಲಮಗನ ಆಟ.

ಈ ಘಟನೆ ನಡೆದಿದ್ದು ಆಸ್ಟ್ರೇಲಿಯಾದಲ್ಲಿ. ವಯಸ್ಸು ಇನ್ನೂ ಪೂರ್ತಿಯಾಗದ ಹುಡುಗನೊಂದಿಗೆ ಲೈಂಗಿಕ ಚೇಷ್ಟೆಯಲ್ಲಿ ತೊಡಗಿದ್ದ ಮಹಿಳೆ ಗೆ ಒಂದು ವರ್ಷದ ಸಜೆ.

ಕದ್ದು ಮುಚ್ಚಿ ಮಾಡೋ ಯಾವುದೇ ಚಟುವಟಿಕೆಗಳು, ಮಂಚದ್ದೇ ಆಗಲೀ, ಲಂಚದ್ದೇ, ಆಗಲೀ ಯಾವ ರೀತಿ ಬಯಲಾಗುತ್ತವೆ ಎನ್ನೋದೇ ಒಂದು ವಿಸ್ಮಯ. ಆದರೂ ಮನುಷ್ಯ ಕಲಿಯೋಲ್ಲ. ಉಪ್ಪು ಹುಳಿ ತಿಂದ ಶರೀರವಲ್ಲವೇ?

ರಾಜಧಾನಿಯಲ್ಲಿ ನಡೆದ ಅತ್ಯಾಚಾರಕ್ಕೆ ಕಾರಣ ಯಾರು?

rape womenundersiegeprojectdotorg

ನವದೆಹಲಿಯಲ್ಲಿ ನಡೆದ ಅಮಾನುಷ ಅತ್ಯಾಚಾರದ ವಿರುದ್ಧ ದೇಶದಲ್ಲಿ ದೊಡ್ಡ ರೀತಿಯಲ್ಲಿ ಪ್ರತಿಭಟನೆಗಳು ನಡೆದವು, ಮಹಿಳೆಯರು ಮಾನವಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ವಾದುದಕ್ಕೆ ನ್ಯಾಯಾಲಯಗಳನ್ನೂ, ರಾಜಕಾರಣಿ, ಪೊಲೀಸರನ್ನು ನೇರವಾಗಿ ದೂರಿದ ಜನ ಅತ್ಯಾಚಾರಿಗಳಿಗೆ ಗಲ್ಲಿನ ಶಿಕ್ಷೆ ಕೊಡಲು ಆಗ್ರಹಿಸಿದರು. ಕಾಮಪಿಪಾಸು ಪಶುಗಳ ಕೈಗೆ ಸಿಕ್ಕು ಜರ್ಜರಿತಳಾದ ಯುವತಿ ಸಾವಿನೊಂದಿಗೆ ವ್ಯರ್ಥವಾಗಿ ಸೆಣಸಿ ಕೊನೆಯುಸಿರೆಳೆದಳು.

ಟೈಮ್ಸ್ ಆಫ್ ಇಂಡಿಯಾದಲ್ಲಿ ಒಂದು ಲೇಖನ (why Indian men rape – Anand Soondas) ಓದಲು ಸಿಕ್ಕಿತು. ‘ಭಾರತೀಯ ಗಂಡು ಅತ್ಯಾಚಾರವನ್ನೇಕೆ ಎಸಗುತ್ತಾನೆ?’ ರೈಲಿನಲ್ಲಿ ಕಳೆದ ಜುಲೈ ತಿಂಗಳಿನಲ್ಲಿ ಅಸ್ಸಾಮಿನಲ್ಲಿ ನಡೆದ ಹೆಣ್ಣು ಮಗಳೊಬ್ಬಳ ಮೇಲೆ ನಡೆದ ದೌರ್ಜನ್ಯದ ಕುರಿತ ನಡೆದ ವಿದ್ಯಾವಂತರ ಚರ್ಚೆಯಲ್ಲಿ ಒಬ್ಬ ಹೆಣ್ಣಿನ ಕುರಿತು ಹಗುರವಾಗಿ ಮಾತನಾಡಿದ ಬಗ್ಗೆ ಬರೆದಿದ್ದರು ಲೇಖಕರು. ಹಲ್ಲೆಯ ಬಗ್ಗೆ ಮಾತನಾಡುತ್ತಾ ವಾಯು ಸೇನೆಯ ಅಧಿಕಾರಿ ಕೇಳಿದ್ದು ಆಕೆಗೆ ರಾತ್ರಿಯಲ್ಲಿ ಹೊರಗೇನು ಕೆಲಸ ಎಂದು. ಆ ಯುವತಿ ಮದ್ಯ ಸೇವಿಸುತ್ತಿದಳು ಮತ್ತು ಕೆಲವು ಪುರುಷರೊಂದಿಗೆ ಆಕೆ ಚೆಲ್ಲಾಟ ವಾಡುತ್ತಿದ್ದಳು, ಅದಕೆ ತಕ್ಕ ಶಾಸ್ತಿ ಯಾಯಿತು ಎಂದು ಆತ ಹೇಳಿದಾಗ ಕ್ರುದ್ಧನಾದ ಸಹ ಪ್ರಯಾಣಿಕ ಅಧಿಕಾರಿಯನ್ನು ಉದ್ದೇಶಿಸಿ. ಮುಂದಿನ ಸಲ ನಿನ್ನ ಸೋದರಿಯ ಪೃಷ್ಠಗಳನ್ನು ಯಾರಾದರೂ ಹಿಂಡಿದಾಗ ನಿನ್ನ ಸೋದರಿ ಎಷ್ಟು ಮರ್ಯಾದಸ್ಥಳು ಎನ್ನುವುದರ ಬಗ್ಗೆ ಮೊದಲು ಪೊಲೀಸರು ತನಿಖೆ ನಡೆಸಲಿ ಎಂದು ಹೇಳಿದನಂತೆ. ದೌರ್ಜನ್ಯಕ್ಕೊಳಗಾದ ಹೆಣ್ಣುಮಗಳ ಬಗೆಗಿನ ಆ ಅಧಿಕಾರಿಯ ಅಭಿಪ್ರಾಯ ನೋಡಿದಿರಲ್ಲ, ಇದು ವಿದ್ಯಾವಂತರ ಕಥೆ.

ಸಮಾಜವನ್ನು, ದೇಶವನ್ನು ಕಂಗೆಡಿಸುವ ಅತ್ಯಾಚಾರದಂಥ ಘಟನೆಗಳನ್ನು ತಡೆಯಲು ಸಮಾಜ ತನ್ನ ಯುವಜನರ ನೈತಿಕ ಮೌಲ್ಯಗಳು ಪತನಗೊಳ್ಳುತ್ತಿರುವ ಕಡೆ ಗಮನ ನೀಡಬೇಕು. ಗತಿಸಿಹೋದ ವೈಭವದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದರಿಂದಲೋ, ಉತ್ಸವಗಳನ್ನು ಆಚರಸುವುದರಿಂದಲೋ ಸಮಾಜದ ಏಳಿಗೆ ಅಥವಾ ಸುರಕ್ಷತೆ ಅಸಾಧ್ಯ. ನವ ದೆಹಲಿಯ ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ನಮ್ಮ ದೇಶದಲ್ಲಿ ಅತ್ಯಚಾರದ ಕುರಿತು ಬಹು ದೊಡ್ಡ ಚರ್ಚೆಯನ್ನೇ ಆರಂಭಿಸಿದೆ. “ನಿರ್ಭಯ” ಎನ್ನುವ ಯುವತಿಯ ದಾರುಣ ಅಂತ್ಯದ ನಂತರ ಸಮಾಜ ಎಚ್ಚೆತ್ತು ಕೊಳ್ಳಲು ಆರಂಭಿಸುತ್ತಿದೆ. ಅದರ ನಡುವೆಯೇ ಮಹಿಳೆ ಲಕ್ಷ್ಮಣ ರೇಖೆಯನ್ನು ದಾಟಬಾರದ, ದಾಟಿದರೆ ಆಗುವ ದುಷ್ಪರಿಣಾಮಗಳ ಕುರಿತ ಬೋಧನೆಗಳು (ಮಧ್ಯ ಪ್ರದೇಶದ ಮಂತ್ರಿ ಮಹೋದಯ ಹೇಳಿದ್ದು) ಕೇಳಿ ಬರುತ್ತಿವೆ. ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ಮಹಿಳೆಯನ್ನು ಹೊಣೆಗಾರಳನ್ನಾಗಿಸುವ ಮಾತುಗಳೂ ಕೇಳಿ ಬರುತ್ತಿವೆ.

ರಾಜಧಾನಿಯಲ್ಲಿ ಅಮಾಯಕ ಯುವತಿಯ ಮೇಲಿನ ಅತ್ಯಾಚಾರ ನಡೆದ ನಂತರ ಅತ್ಯಾಚಾರಕ್ಕೆ ಕಾರಣವಾಗುವ ಅಂಶಗಳನ್ನು ಚರ್ಚಿಸ ತೊಡಗಿದ ದೇಶಕ್ಕೆ ಮತ್ತೊಂದು ರೀತಿಯ ಆಘಾತ ರಾಜಕಾರಣಿಗಳ ಮಾತಿನಿಂದ. ಹಿಂದುತ್ವ ರಾಷ್ಟ್ರವಾದೀ ಸಂಘಟನೆ ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ಈ ಚರ್ಚೆಗೆ ಮತ್ತಷ್ಟು ಬಿಸಿ ಹೆಚ್ಚಿಸಿದರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ. ಪತಿ ಮತ್ತು ಪತ್ನಿ ಸಾಮಾಜಿಕ ಕರಾರಿನ ಕಟ್ಟುಪಾಡಿನ ಒಳಗೆ ತಮ್ಮ ಜವಾಬ್ದಾರಿ ನಿರ್ವಹಿಸಬೇಕು, ಪತಿ ಹೊರಗೆ ದುಡಿದರೆ ಮಹಿಳೆ ಮನೆಯೊಳಗಿದ್ದು ತನ್ನ ಜವಾಬ್ದಾರಿ ಪೂರೈಸಬೇಕು. ಈ ಜವಾಬ್ದಾರಿಗಳು ಅದಲು ಬದಲಾದಾಗ ಅಥವಾ ಮಹಿಳೆ ತನ್ನ ಜವಾದ್ಬಾರಿ ಮರೆತು ಮನೆಯ ಹೊರಗಿನ ಚಟುವಟಿಕೆಗಳಲ್ಲಿ ನಿರತಳಾದಾಗ ಆಗುವ ಪರಿಣಾಮಗಳನ್ನು ವಿಶ್ಲೇಷಿಸಿ ವಿವಾದದ ಸೃಷ್ಟಿಗೆ ಕಾರಣರಾದರು. ಅತ್ಯಾಚಾರ ನಡೆಯುತ್ತಿರುವುದು ವಿದೇಶೀ ಸಂಸ್ಕಾರ ಪ್ರೇರಿತ ‘ಇಂಡಿಯಾ’ ದಲ್ಲಿ, ಸಂಪ್ರದಾಯಸ್ಥ ‘ಭಾರತ’ದಲ್ಲಿ ಅಲ್ಲ ಎನ್ನುವ ಮಾತಿನೊಂದಿಗೆ ದೇಶದೊಳಗೇ ಮತ್ತೊಂದು ದೇಶವನ್ನು ಕಾಣುವ ವ್ಯರ್ಥ ಪ್ರಯತ್ನ ಸಹ ಮಾಡಿದರು ಭಾಗವತ್. ಮಾಧ್ಯಗಳು, ಸಾಮಾಜಿಕ ವೆಬ್ ತಾಣಗಳ ಮೂಲಕ ನಗರಗಳಲ್ಲಿ ನಡೆಯುತ್ತಿರುವ ಅತ್ಯಾಚಾರದ ವರದಿಯಾದರೂ ಓದಲಿಕ್ಕೆ ಸಿಗುತ್ತಿದೆ. ವರದಿಯಾಗದ, ಬೆಳಕಿಗೆ ಬಾರದ ಕಾರಣಕ್ಕಾಗಿ ಗ್ರಾಮಾಂತರ ಪ್ರದೇಶಗಳು ಸುರಕ್ಷಿತ ಎನ್ನುವ ಭಾವನೆ ಒಂದು ಭ್ರಮೆ ಅಷ್ಟೇ.

ಸಾಹಿತ್ಯ, ಕವಿತೆಗಳಲ್ಲಿ, ಸಿನಿಮಾಗಳಲ್ಲಿ ಮುಕ್ತತೆಯನ್ನು ಬಯಸುವ ನಾವು ನಮ್ಮ ಯುವಜನರ ನಡತೆಗೆ ಏಕೆ ಕಡಿವಾಣ ತೊಡಿಸಬೇಕು? ಕಥೆ ಕಾದಂಬರಿ, ಜಾಹೀರಾತು, ಸಿನೆಮಾಗಳಲ್ಲಿ ಎಗ್ಗಿಲ್ಲದೆ ಲೈಂಗಿಕತೆ ತುರುಕಿ ಮಜಾ ಕಾಣುವ ಜನ ಅತ್ಯಾಚಾರದಂತಹ ಘಟನೆಗಳು ಸಂಭವಿಸಿದಾಗ ಹೈರಾಣಾಗುವುದಾದರೂ ಏಕೆ ಎನ್ನುವುದೇ ಅರ್ಥವಾಗುವುದಿಲ್ಲ. ಎಲ್ಲೇ ಕಣ್ಣಾಡಿಸಿದರೂ ಲೈಗಿಕತೆ, ನಗ್ನತೆಯ ದರ್ಶನ ವಾದಾಗ ಆಗುವ ಅನಾಹುತಕ್ಕೆ ಸಮಾಜ ಹೊಣೆ ಹೊರಬೇಕು. ಅಥವಾ ಮುಕ್ತತೆ, ಕ್ರಿಯಾಶೀಲತೆ ಹೆಸರಿನಲ್ಲಿ ನಗ್ನತೆ, ಅಶ್ಲೀಲತೆ ಸೆಕ್ಸ್ ಅನ್ನು ವೈಭವೀಕರಿಸುವುದಾದರೆ ಅಂಥ ಚಿತ್ರ ಗಳನ್ನು ನೋಡಿದ ನಂತರ ಉಂಟಾಗುವ ಉದ್ದೀಪನಕ್ಕೂ ಒಂದು ಔಟ್ ಲೆಟ್ ಸಮಾಜ ನಿರ್ಮಿಸಬೇಕು. ನಮ್ಮ ಚಿತ್ರಗಳಲ್ಲಿ ಕಾಣ ಸಿಗುವ ನರ್ತನ ವನ್ನಾದರೂ ನೋಡಿ, ವಾತ್ಸಾಯನನ ಎಲ್ಲಾ ಭಂಗಿಗಳೂ ಒಂದೆರಡು ಹಾಡುಗಳಲ್ಲಿ ಕಾಣಲು ಲಭ್ಯ. ಗಂಡಿನ ಒಳ ಉಡುಪಿನಿಂದ ಹಿಡಿದು ಕಾರಿನ ಟೈರ್ ಗಳ ಜಾಹೀರಾತಿಗೂ ಬೇಕು ಹೆಣ್ಣು. ಒಂದು ಕಡೆ ನಗ್ನತೆಯ ನಗ್ನ ಪ್ರದರ್ಶನ ಮತ್ತೊಂದು ಕಡೆ ಹುಡಗರು ಹುಡುಗಿಯರು ದಾರಿ ತಪ್ಪ ಬಾರದು ಎನ್ನುವ ಕಡಿವಾಣ, ಹೆಣ್ಣಿನ ಕನ್ಯತ್ವ ಕಾಪಾಡಿಕೊಳ್ಳಬೇಕಾದ ಕುರಿತು ವಿಪರೀತ ಕಾಳಜಿ. ಹೆಣ್ಣನ್ನು ಭೋಗದ ವಸ್ತುವನ್ನಾಗಿ ಮಾತ್ರ ಕಾಣಲು ಸಮಾಜ ಉತ್ಸುಕತೆ ತೋರಿಸಿದರೆ ನವ ದೆಹಲಿಯಲ್ಲಿ ನಡೆದಂಥ ಅಮಾನುಷ, ದುರದೃಷ್ಟಕರ ಘಟನೆಗಳಿಗೂ ಸಾಕ್ಷಿ ನಿಲ್ಲಬೇಕಾಗುತ್ತದೆ.

ಸಮಾಜ ಗಂಡಿನ ಪ್ರಾಮುಖ್ಯತೆ ಬಗ್ಗೆ ಅತೀವ ಗಮನ ನೀಡುತ್ತಿರುವುದೂ ಸಹ ಮಹಿಳೆಯ ದಾರುಣ ಅವಸ್ಥೆಗೆ ಮತ್ತೊಂದು ಕಾರಣ. ಹುಟ್ಟುವ ಮಗು ಹೆಣ್ಣು ಎಂದು ಖಾತ್ರಿಯಾದ ಕೂಡಲೇ ಭ್ರೂಣ ಹತ್ಯೆ ಮೂಲಕ ಹೆಣ್ಣು ಮಗಳನ್ನು ಕೊಲೆಗೈಯ್ಯಲು ಹೇಸದ ಸಮಾಜದಿಂದ ಒಳ್ಳೆಯತನವನ್ನು ನಿರೀಕ್ಷಿಸುವುದು ಕಷ್ಟಕರವಾದ ಕೆಲಸವೇ. ಇನ್ನು ಭ್ರೂಣಾವಸ್ಥೆಯಿಂದ ಭಡ್ತಿ ಪಡೆದು ಧರಿತ್ರಿ ಮುಟ್ಟಿದ ಕೂಡಲೇ ತನ್ನ ಹುಟ್ಟನ್ನು ಪ್ರಪಂಚಕ್ಕೆ ತಿಳಿಸಲು ತಂದೆ ತಾಯಿಗಳಿಗೂ, ಆ ಶುಭ ವಾರ್ತೆಯನ್ನು ಕೇಳುವ ಜನರಿಗೂ ಒಂದು ತೆರನಾದ ಸಂಕಟ… ಅಯ್ಯೋ, ಹೆಣ್ಣಾ? ಹೆಣ್ಣು ಅಬಲೆ, ಹೆಣ್ಣಿನ ಬುದ್ಧಿ ಮೊಣಕಾಲ ಕೆಳಗೆ, ಮುಂತಾದ ಮಾತುಗಳನ್ನು ಕೇಳುತ್ತಾ ಬೆಳೆಯುವ ಗಂಡು ಮಕ್ಕಳಿಗೆ ಹೆಣ್ಣಿನ ಮೇಲೆ ಗೌರವ ತೋರುವುದಾದರೂ ಹೇಗೆ? ಹೆಣ್ಣಿನ ಬುದ್ಧಿ ಮೊಳ ಕಾಲ ಕೆಳಗೆ, ಮುಂತಾದ ಮಾತುಗಳ ಮೂಲಕ ಹೆಣ್ಣಿನ ಅಸ್ತಿತ್ವದ ಕುರಿತು ಕೀಳರಿಮೆ ಬರುವಂಥ ನಡತೆಗಳೂ ಸಹ ಕಾರಣ ಮಹಿಳೆಯ ವಿರುದ್ಧ ನಡೆಯುತ್ತಿರುವ ಹಿಂಸೆ, ಅತ್ಯಾಚಾರ. ಹೆಣ್ಣನ್ನು ದೇವಿ, ‘ಮಾತಾ ಶ್ರೀ’ ಎಂದು ಪೂಜಿಸುವ, ಆದರಿಸುವ ಸಮಾಜವೇ ಸಂದರ್ಭ ಬಂದಾಗ ಮಹಿಳೆ ವಿರುದ್ಧ ಹೇಸಿಗೆ ಹುಟ್ಟಿಸುವ ಕೆಲಸಕ್ಕೂ ಮುಂದಾಗುವುದು ಅರ್ಥವಾಗದ ಒಗಟು. ಮಹಿಳೆಯರ ಮೇಲಿನ ದೌರ್ಜನ್ಯ ಕಂಡು ಬೇಸತ್ತ ಒಬ್ಬ ಮಹಿಳೆ ಹೇಳುವುದು, “ಹೆಣ್ಣು ಮಕ್ಕಳನ್ನು, ಸಂಗೀತ ಕಲಿಯಲಿಕ್ಕೋ, ನೃತ್ಯ ಕಲಿಯಲಿಕ್ಕೋ ಕಳಿಸಬೇಡಿ, ಬದಲಿಗೆ ಕರಾಟೆ, ಜೂಡೋ ಕಲಿಯಲು ಪ್ರೋತ್ಸಾಹಿಸಿ” ಇಂಥ ಮಾತು ಓರ್ವ ಹೆಣ್ಣು ಮಗಳ ಬಾಯಿಂದ ಬರಬೇಕಾದರೆ ಗಂಡಿನ ಕುರಿತ ಆಕೆಯ ಅಪನಂಬಿಕೆ ನಮಗೆ ವೇದ್ಯವಾಗುತ್ತದೆ.

ಬಹುಶಃ ವಿಶ್ವದಲ್ಲೇ ಅತೀ ಹೆಚ್ಚು ಪ್ರಭಾವೀ ಮಹಿಳಾ ರಾಜಕಾರಣಿಗಳು ಇರುವ ದೇಶ ನಮ್ಮದು. ಸರಕಾರವನ್ನು ಮುನ್ನಡೆಸುತ್ತಿರುವ ಮಹಿಳೆಯಿಂದ ಹಿಡಿದು, ವಿರೋಧ ಪಕ್ಷದ ನಾಯಕಿ. ಮುಖ್ಯ ಮಂತ್ರಿ, ಉನ್ನತ ಮಂತ್ರಿ ಪದವಿಗಳನ್ನು ಅಲಂಕರಿಸಿ ಕೂತ ಮಹಿಳೆಯರಿಗೆ ಅವರದೇ ಸಮಸ್ಯೆಗಳ ಅರಿವು ಇಲ್ಲದಿರುವುದು ಆಶ್ಚರ್ಯಕರ. ಇಷ್ಟೊಂದು ಮಹಿಳಾ ರಾಜಕಾರಣಿಗಳು ವಿಜ್ರಂಭಿಸುವ ದೇಶದಲ್ಲೇ ಹೆಣ್ಣಿನ ಪರಿಸ್ಥಿತಿ ಹೀಗಾದರೆ?

ಮಹಿಳೆಯರ ವಿರುದ್ಧ ನಡೆಯುವ ಯಾವುದೇ ಹಿಂಸೆ ಅತ್ಯಚಾರ ಗಳನ್ನು ವ್ಯವಸ್ಥೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ತಕ್ಕ ಶಿಕ್ಷೆ ಯನ್ನು ಫಾಸ್ಟ್ ಟ್ರಾಕ್ ಕೋರ್ಟ್ ಗಳ ಮೂಲಕ ಕೊಡ ಮಾಡಿಸಬೇಕು. ಅತ್ಯಾಚಾರವೆಸಗುವ ಗಂಡಿನ ವಯಸ್ಸಿನ ಮಿತಿಯನ್ನು ಹದಿನೆಂಟರಿಂದ ಹದಿನೈದಕ್ಕೆ ಇಳಿಸಬೇಕು. ನವ ದೆಹಲಿಯಲ್ಲಿ ಅತ್ಯಾಚಾರವೆಸಗಿದ ಪುರುಷರ ಪೈಕಿ ಹದಿನೇಳು ವಯಸ್ಸಿನ ಹುಡುಗನ ಪಾತ್ರ ಅತ್ಯಂತ ಕ್ರೂರವಂತೆ. ಚಿಕ್ಕ ವಯಸ್ಸಿನಲ್ಲೇ ಹಡಬೆ ಕೆಲಸಕ್ಕೆ ಕೈ ಹಚ್ಚುತ್ತಿರುವ ಸಮೂಹಕ್ಕೆ ಶಿಕ್ಷೆಗೆ ಅವಶ್ಯವಾದ ಪರಿಮಿತಿಯನ್ನು ಕೆಳಕ್ಕಿಳಿಸಿದಾಗಲೇ ಇತರರಿಗೆ ಎಚ್ಚರಿಕೆಯ ಘಂಟೆ. ಅತ್ಯಾಚಾರಿಗೆ ನೇಣಿನ ಶಿಕ್ಷೆಯನ್ನಲ್ಲದೆ ಬೇರಾವುದೇ ಶಿಕ್ಷೆಗೂ ಒಳಪಡಿಸಬಾರದು. ಏಕೆಂದರೆ, ಮಹಿಳೆಯ ವಿರುದ್ಧ ನಡೆಯುವ ಅತ್ಯಾಚಾರ ಒಂದು ರೀತಿಯ crime against humanity.

pic courtesy: http://www.womenundersiege.org

 

ಗಾಂಧೀಜಿ ಕಂಡುಕೊಂಡ ಲೈಂಗಿಕತೆ

ಬಡಕಲು ಶರೀರದ, ತುಂಡು ಬಟ್ಟೆಯ, ಬ್ರಿಟಿಷರು “ಫಕೀರ ಎಂದು ಕರೆಯುತ್ತಿದ್ದ ಗಾಂಧಿ ಒಂದು ಅಪರೂಪದ ವ್ಯಕ್ತಿತ್ವ. ಬಿಳಿಯರ ದಾಸ್ಯದಿಂದ ಅಹಿಂಸಾತ್ಮಕವಾಗಿ ನಮಗೆ ಮುಕ್ತಿ ಕೊಡಿಸಿದ ಗಾಂಧೀಯ ಬಗ್ಗೆ ಕೆಲವರಿಗೆ ಪೂಜ್ಯ, ಗೌರವ ಭಾವನೆ ಇದ್ದರೆ ಇನ್ನೂ ಕೆಲವರಿಗೆ ಅವರ ಆದರ್ಶ ಮತ್ತು ಆಶಯಗಳ ಬಗ್ಗೆ ತಕರಾರು. ನಾನು ಚಿಕ್ಕವನಿದ್ದಾಗ ಶಾಲೆಯಲ್ಲಿ ಚರಿತ್ರೆಯ ಅಧ್ಯಾಪಕರು ಗಾಂಧೀಯವರನ್ನು ಏಕವಚನದಲ್ಲಿ ಸಂಬೋಧಿಸಿ ತಮ್ಮದೇ ಆದ ರಾಜಕೀಯ ಆಶಯಗಳ ಚರಿತ್ರೆ ಓದುತ್ತಿದ್ದಾಗ ಸಿಟ್ಟಿಗೆದ್ದಿದಿದೆ. ಮನೆಗಳಲ್ಲಿ ನಾವು ಕಲಿತಿದ್ದು ಹಿರಿಯರನ್ನು ಗೌರವಿಸಬೇಕು, ಬಹುವಚನದಲ್ಲಿ ಕರೆಯಬೇಕು ಎಂದು. ಅದರಲ್ಲೂ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾ ಚೇತನ ಎಂದರಂತೂ ಏಕವಚನ ದೂರವೇ ಉಳಿಯಿತು. ದೊಡ್ಡವನಾಗುತ್ತಾ ಗಾಂಧಿಯ ಬಗ್ಗೆ ಇನ್ನೂ ಚಿತ್ರ ವಿಚಿತ್ರ ಸಂಗತಿಗಳು ಕೇಳಲು ಸಿಕ್ಕವು. ಗಾಂಧೀ ರಾಜಕಾರಣದ ಬಗ್ಗೆ ಅವರ ಉದ್ದೇಶಗಳ ಬಗ್ಗ್ಗೆ ಹಲವರಿಗೆ ಹಲವು ರೀತಿಯ ಅಭಿಪ್ರಾಯ. ವಿಚಿತ್ರವೆಂದರೆ ಗಾಂಧೀ ಬಗ್ಗೆ ದೇಶದ ಒಳಗೆ ಮಾತ್ರ ವಿರೋಧವಲ್ಲ, ಅವರು ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಸುತ್ತಿದ್ದಾರೆಂದು, ಮುಸ್ಲಿಂ ದೇಶವನ್ನು ಹುಟ್ಟುಹಾಕಲು ಕಾರಣಕರ್ತರಾದರೆಂದು ಅವರನ್ನು ವಧಿಸಿದ ನಾಥೂರಾಂ ಗೋಡ್ಸೆಯ ಅಭಿಪ್ರಾಯದಿಂದ ಹಿಡಿದು ಪಾಕಿಸ್ತಾನದ ದಿವಂಗತ ಮಾಜಿ ಪ್ರಧಾನಿ ಜುಲ್ಫಿಕರ್ ಅಲಿ ಭುಟ್ಟೋ ವರೆಗೂ ಅವರ ಬಗ್ಗೆ ಸಂಶಯ. ಭುಟ್ಟೋ ತಾವು ಬರೆದ ಪುಸ್ತಕವೊಂದರಲ್ಲಿ ಗಾಂಧೀಜೀ ಹೀಗೆ ಹೇಳಿದ್ದರೆಂದು ಉಲ್ಲೇಖಿಸಿದ್ದರು. “ಒಂದು ವೇಳೆ ಹಿಂದೂಧರ್ಮ ಭಾರತದಿಂದ ಅಥವಾ ಏಷಿಯಾ ಖಂಡದಿಂದ ಮೂಲೋತ್ಪಾಟನೆಯಾದರೆ ಹಿಂದೂ ಧರ್ಮದ ಕತೆ ಮುಗಿದಂತೆ, ಆದರೆ ಇಸ್ಲಾಂ ಭಾರತದಿಂದ, ಯಾ ಏಶಿಯದಿಂದಲೇ ಮೂಲೋತ್ಪಾಟನೆಯಾದರೂ ಅದು ಬೇರೆಲ್ಲಾದರೂ ಚಿಗುರೊಡೆಯುತ್ತದೆ, ಬೆಳೆಯುತ್ತದೆ” ಎಂದು ಹೇಳಿದ ಗಾಂಧೀಜಿ ಮುಸ್ಲಿಮರು ಭಾರತದಿಂದ ಹೊರದಬ್ಬಲ್ಪಟ್ಟರೆ ಅದು ಸಮರ್ಥನೀಯ ಎನ್ನುವ ಅಭಿಪ್ರಾಯವ ನ್ನು ಹೊಂದಿದ್ದರು ಎಂದು ಬರೆದು ಗಾಂಧೀಜಿಯ ಇಬ್ಬಂದಿತನವನ್ನು ಟೀಕಿಸಿದ್ದರು. ಗಾಂಧಿ ಇಲ್ಲೂ ಸಲ್ಲಲಿಲ್ಲ, ಅಲ್ಲೂ ಸಲ್ಲಲಿಲ್ಲ.

ಗಾಂಧೀ ದೇಶದ ಒಳಗೆ ಮಾತ್ರವಲ್ಲ ವಿಶ್ವದೆಲ್ಲೆಡೆ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು. ಆಫ್ರಿಕಾದ ಮಂಡೇಲಾ ರಿಂದ ಹಿಡಿದು ಅಮೆರಿಕೆಯ ಮಾರ್ಟಿನ್ ಲೂಥೆರ್ ಕಿಂಗ್ ವರೆಗೆ ಮಹನೀಯರಿಗೆ ಗಾಂಧೀ ಆದರ್ಶ ವ್ಯಕ್ತಿ. ಇಂಗ್ಲೆಂಡಿನಿಂದ ಪ್ರಕಟವಾಗುವ independent ಪತ್ರಿಕೆಯಲ್ಲಿ ಗಾಂಧಿಯವರ ಬಗ್ಗೆ ಲೇಖನ ನಿನ್ನೆ ಪ್ರಕಟವಾಯಿತು. ಸಾಧಾರಣ ರಾಜಕೀಯ ಆಶಯಗಳ ಬಗೆಗಿನ ಲೇಖನವಾಗಿದ್ದರೆ ಆಸಕ್ತಿ ಇರುತ್ತಿರಲಿಲ್ಲವೇನೋ. ಆದರೆ ಇದು ಗಾಂಧೀಯವರ ಲೈಂಗಿಕ ಬದುಕಿನ ಬಗ್ಗೆ ಬರೆದ ಲೇಖನವಾಗಿತ್ತು. ಒಂದು ರೀತಿಯ explosive material. ಇದನ್ನು ನೋಡಿ ನಾನು ಸ್ವಲ್ಪ ಹಿಮ್ಮೆಟ್ಟಿದರೂ ಪೀಯುಸೀ ಯಲ್ಲಿದ್ದಾಗ ” intimate sex lives of famous people” ಪುಸ್ತಕದಲ್ಲಿ ಹಿಟ್ಲರ್ ಮಹಾಶಯನ ಲೀಲೆಗಳಿಂದ ಹಿಡಿದು ಗಾಂಧಿಯ ತನಕ ಪ್ರಸ್ತಾಪವಿತ್ತು. ಈಗ ಮತ್ತೊಮ್ಮೆ ಈ ಪೆಡಂಭೂತ ತಲೆ ಎತ್ತಿದ್ದು ನೋಡಿ ಈ ಲೇಖನವನ್ನು ತಮ್ಮೊಂದಿಗೂ ಹಂಚಿ ಕೊಳ್ಳಲು ನಿರ್ಧರಿಸಿದೆ.

ಗಾಂಧೀಜಿ ಕೇವಲ ಒಬ್ಬ ರಾಜಕಾರಣಿ ಯಾಗಿರದೆ ಆಧ್ಯಾತ್ಮಿಕ ವ್ಯಕ್ತಿಯೂ ಆಗಿದ್ದರು. ಮುಸ್ಲಿಂ ಪರ ಎಂದು ಅವರನ್ನು ಧ್ವೇಷಿಸುತ್ತಿದ್ದ ಹಿಂದೂ ಪರ ವ್ಯಕ್ತಿಗಳಿಗಿಂತ ಹೆಚ್ಚು ಸಂಪ್ರದಾಯಸ್ಥರಾಗಿದ್ದರು ಗಾಂಧೀ. ತಮ್ಮ ಆಶ್ರಮದ ಲ್ಲಿ ಭಜನೆ, ವ್ರತ ಗಳಂಥ ಧಾರ್ಮಿಕ ಚಟುವಟಿಕೆಗಳಲ್ಲಿ ಸದಾ ನಿರತರಾಗಿರುತ್ತಿದ್ದ ಗಾಂಧೀಜಿಗೆ ಲೈಂಗಿಕ ಬದುಕಿನ ಬಗ್ಗೆ ಒಂದು ರೀತಿಯ ಪಾಪ ಭಾವನೆ ಇತ್ತು. ತಮ್ಮ ಪ್ರೀತಿಯ ತಂದೆ ಕೊನೆಯುಸಿರೆಳೆಯುತ್ತಿದ್ದರೂ ಅದರ ಮಧ್ಯೆ ಎದ್ದು ಹೋಗಿ ತಮ್ಮ ಲೈಂಗಿಕ ಚಪಲ ತೀರಿಸಿ ಕೊಳ್ಳಲು ಹೋಗಿದ್ದರು. ಆದರೆ ತಮಗೆ ಬೇಕಿದ್ದನ್ನು ಪಡೆದುಕೊಂಡ ಗಾಂಧೀ ತನ್ನ ತಂದೆಯಯನ್ನು ಕಳೆದುಕೊಂಡಿದ್ದರು. ಇಲ್ಲಿಂದ ಶುರುವಾಗಿದ್ದು ಗಾಂಧೀಜಿಯ ವೈರಾಗ್ಯ ಭಾವ. ವಿವಾಹಿತರಾದರೂ ಲೈಂಗಿಕ ಕ್ರಿಯೆ ನಡೆಸದೆ ಸನ್ಯಾಸದ ಬದುಕು ನಡೆಸಿ ಎಂದಾಗ ಬಹಳ ಷ್ಟು ಜನ ಹುಬ್ಬೇರಿಸಿದ್ದರು. ಸಹಜ ತಾನೇ. ಮನುಷ್ಯ ಮದುವೆಯಾದ ಕೂಡಲೇ ಜಿಗಿಯುವುದು ಪ್ರಸ್ಥದ ಕೋಣೆಗೆ. ಅದು ಬಿಟ್ಟು ವೃತಾಚರಿಸುತ್ತಾ “ರಘು ಪತಿ ರಾಘವ ರಾಜಾರಾಂ ಎನ್ನುತ್ತ ಇರು ಎಂದರೆ ಜನ ಹುಬ್ಬೆರಿಸದೆ ಇರುತ್ತಾರೆಯೇ, ಅದರಲ್ಲೂ ನೆಹರೂರಂಥ ರಸಿಕ ಮಹಾನರು? ಗಾಂಧೀಜಿಯ ಈ ಹೊಸ ವಾದ ಕೇಳಿದ ನೆಹರೂ ಹೇಳಿದ್ದು ” ಅಸ್ವಾಭಾವಿಕ ಮತ್ತು ವಿಕೃತ” ಎಂದು. ಗಾಂಧೀಜಿಯನ್ನು ರಾಷ್ಟ್ರ ಪಿತ ಪಟ್ಟಕ್ಕೆ ಏರಿಸಿದ್ದರಿಂದ ಬಹಳಷ್ಟು ಅಪ್ರಿಯ ವಿಷಯಗಳನ್ನ ಮುಚ್ಚಿ ಹಾಕಲಾಯಿತು. ಹೀಗೆ ಗಾಂಧೀಜಿಯ ಕೆಲವೊಂದು ವಿಷಯಗಳನ್ನು ಒಪ್ಪದವರು ಶಿಷ್ಟಾಚಾರಕ್ಕೆ ಮಣಿದು ಮೌನವಾಗಿದ್ದರೆ ಇನ್ನೂ ಕೆಲವರು ಗಾಂಧೀಜಿಯನ್ನು ” ಅತ್ಯಂತ ಅಪಾಯಕಾರಿ ಮತ್ತು ಪಾರ್ಶ್ವವಾಗಿ ಅದುಮಿಟ್ಟ ಕಾಮೋನ್ಮತ್ತ” ಎಂದು ಕರೆದರು. ಅಂದರೆ ಗಾಂಧೀಜಿಯ ಜೀವಿತ ಕಾಲದಲ್ಲೂ ಬಹಳಷ್ಟು ಟೀಕಾಕಾರರು ಅವರನ್ನು ವಿಮರ್ಶಿಸಿದ್ದರು ಎಂದು ನಮಗೆ ಅರಿವಾಗುವುದು.

ಹೀಗೆ ತಮ್ಮ ತಂದೆಯ ಸಾವಿನ ಸಂದರ್ಭದ ಘಟನೆಯಿಂದ ನೊಂದ ಗಾಂಧೀಜಿ ವೈರಾಗ್ಯದ ಕಡೆ ವಾಲ ತೊಡಗಿ ತಾವೇ ನಡೆಸುತ್ತಿದ್ದ ಪತ್ರಿಕೆಗೆ ಹೀಗೆ ಬರೆದರು. ” ವಿವಾಹಿತರಾಗದೆ ಇರುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಹಾಗೇನಾದರೂ ಆತ ವಿವಾಹದ ವಿಷಯದಲ್ಲಿ ನಿಜಕ್ಕೂ ನಿಸ್ಸಹಾಯಕನಾದರೆ ತನ್ನ ಪತ್ನಿಯೊಂದಿಗೆ ಲೈಂಗಿಕತೆಯನ್ನು ತ್ಯಜಿಸಬೇಕು”. ಇದೊಂಥರಾ ವಿಚಿತ್ರ ನಡವಳಿಕೆಯಾಗಿ ತೋರಿತು ಜನರಿಗೆ. ಹಸಿದವನ ಮುಂದೆ ಮೃಷ್ಟಾನ್ನ ಬಡಿಸಿ ಉಪವಾಸವಿರು ಎಂದಂತೆ. ಆದರೆ ಮನುಷ್ಯನ ಈ ನೈಸರ್ಗಿಕ ಭಾವನೆಗಳನ್ನು ಅದುಮಿಡಲು ಸಾಧ್ಯವಾಗದು ಎನ್ನುವ ಸಾಮಾನ್ಯ ಜ್ಞಾನ ಗಾಂಧೀಜಿಗೆ ಹೇಗೆ ತಪ್ಪಿತೋ ಏನೋ. ಹೀಗೆ ಜನರನ್ನು ಲೈಂಗಿಕತೆಯಿಂದ ದೂರ ಎಳೆಯಲು ಪ್ರಯತ್ನಿಸಿದ ಅವರು ತಮ್ಮಲ್ಲಿ ಸುಪ್ತವಾಗಿ ಅಡಗಿದ್ದ ದಾಹವನ್ನು ಬೇರೆಯದೇ ಆದ ರೀತಿಯಲ್ಲಿ ಅದುಮಿಡಲು ದಾರಿ ಕಂಡು ಕೊಂಡರು. ತಮ್ಮ ಆಶ್ರಮದಲ್ಲಿ ಹೆಣ್ಣು ಗಂಡುಗಳು ಒಟ್ಟಿಗೆ ಸ್ನಾನ ಮತ್ತು ಮಲಗುವುದಕ್ಕೆ (ಲೈಂಗಿಕ ಚಟುವಟಿಕೆ ಖಂಡಿತಾ ಇಲ್ಲ) ಅನುಮತಿ ನೀಡಿ, ಲೈಂಗಿಕತೆ ಕೂಡಿದ ಮುಕ್ತ ಹರಟೆಗಳಿಂದ ಅವರನ್ನು ತಡೆದರು. ಅಷ್ಟೇ ಅಲ್ಲ, ಗಂಡಂದಿರು ತಮ್ಮ ಪತ್ನಿಯರೊಂದಿಗೆ ಯಾವಾಗಲೂ ಏಕಾಂತ ವಾಗಿ ಇರಕೂಡದು ಮತ್ತು ಹಾಗೇನಾದರೂ ಎಡವಟ್ಟಾಗುವ ಭಯವಿದ್ದಲ್ಲಿ ತಣ್ಣೀರಿನ ಸ್ನಾನ ಮಾಡಬೇಕೆಂದು ತಾಕೀತು ಮಾಡುವುದನ್ನು ಮರೆಯಲಿಲ್ಲ ಮಹಾತ್ಮ.

ಆದರೆ ಈ ತಾಕೀತು ತಮಗೆ ಅನ್ವಯಿಸಿಕೊಳ್ಳ ಲಿಲ್ಲ ಗಾಂಧೀಜಿ ಎಂದು ಹೇಳುತ್ತಾರೆ ಲೇಖಕ ಆಡಮ್ಸ್. ಗಾಂಧೀಜಿಯವರ ಆಪ್ತ ಸಹಾಯಕರ ಆಕರ್ಷಕ ಸೋದರಿ ಸುಶೀಲ ನಾಯರ್ (ಈಕೆ ಗಾಂಧೀಜಿಯವರ ಖಾಸಗಿ ವೈದ್ಯೆ ಸಹ) ಗಾಂಧೀಜಿ ಯೊಂದಿಗೆ ಸ್ನಾನವನ್ನೂ ಮಾಡುತ್ತಿದ್ದರು ಮತ್ತು ಒಟ್ಟಿಗೆ ಮಲಗುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ ಗಾಂಧೀಜಿ ಹೇಳಿದ್ದು “ಸಭ್ಯತೆ ಮೀರದಂತೆ ನಾವೀ ಕೆಲಸ ಮಾಡುತ್ತಿದ್ದದ್ದು, ಮತ್ತು ಆಕೆ ಸ್ನಾನ ಮಾಡುವಾಗ ನಾನು ಕಣ್ಣು ಮುಚ್ಚಿ ಕೊಂಡು ಇರುತ್ತಿದ್ದೆ ಮತ್ತು ಆಕೆ ವಿವಸ್ತ್ರಳಾಗಿದ್ದಳೋ ಎಂದು ನನಗೆ ತಿಳಿಯದು, ಆದರೆ ಸಾಬೂನನ್ನು ಹಚ್ಚಿಕೊಳ್ಳುತ್ತಿದ್ದ ಶಬ್ದ ಮಾತ್ರ ನನಗೆ ಕೇಳಿಸುತ್ತಿತ್ತು”. ಈ ರೀತಿಯ ಗಾಂಧೀಜಿಯ “ಪ್ರಯೋಗ” ಗಳು ಆಶ್ರಮದ ಸಹ ನಿವಾಸಿಗಳಲ್ಲಿ ಮತ್ಸರವನ್ನು ಹುಟ್ಟಿಸಿತು ಮಾತ್ರವಲ್ಲ ಇದು ಸ್ವಲ್ಪ ಅತಿಯಾಯಿತೆಂದು ಕೆಲವರಿಗೆ ತೋರಿದರೆ ಗಾಂಧೀಜಿಗೆ ಅನ್ನಿಸಿದ್ದು ” ಈ ಪ್ರಯೋಗದ ಮೂಲಕವೇ ನಿಜವಾದ ದೇಶ ಸೇವೆ ಸಾಧ್ಯ” ಎಂದು. ಈ ರೀತಿಯದಾದ ದೇಶ ಸೇವೆಯ ಮಾದರಿಯನ್ನು ಸಹಿಸದ ಕೆಲವರು ಗಾಂಧೀಜಿ ನಡೆಸುತ್ತಿದ್ದ ಪತ್ರಿಕೆಯನ್ನು ತೊರೆದರು.

ಆದರೆ ಈ ವಿಷಯಗಳೆಲ್ಲಾ ಗಾಂಧೀಜಿಯ ಸುತ್ತಮುತ್ತಲಿನವರಿಗೆ ತಿಳಿದಿದ್ದರೂ ಗಾಂಧೀಜಿ ಇದರ ಬಗ್ಗೆ ಗೌಪ್ಯತೆ ಯನ್ನು ಪಾಲಿಸಲಿಲ್ಲ. ಮತ್ತು ಇದರ ಬಗ್ಗೆ ತಮ್ಮ ಮಗನಿಗೂ ಪತ್ರದ ಮೂಲಕ ಬರೆದು ತಿಳಿಸಿದ್ದರು. ಹೀಗೆ ನಿರ್ಭಿಡೆಯಿಂದ, ಗೌಪ್ಯತೆ ಪಾಲಿಸದೆ ತನ್ನದೇ ಆದ ವಿಶ್ಲೇಷಣೆ ಗಳನ್ನು ನೀಡುತ್ತಾ ನಡೆದ ಗಾಂಧೀಜಿ ಬಹುಶಃ ಸಾಮಾನ್ಯವಾಗಿ ಸಾಧಾರಣ ಜನರಲ್ಲಿ ಕಾಣಸಿಗುವ ಲೈಂಗಿಕತೆಯಿಂದ ಮುಕ್ತರಾಗಿದ್ದರೋ ಏನೋ. ತಮ್ಮ ಮಗನಿಗೆ ತಮ್ಮ ಈ ಪ್ರಯೋಗ ಗಳ ಬಗ್ಗೆ ಬರೆಯಲು ಗಾಂಧೀಜಿ ಹೇಳಿದರೂ ಪುತ್ರ ಇದಕ್ಕೆ ಸಮ್ಮತಿಸದೆ ಸಂಬಂಧಿಸಿದವರಿಗೆ ತಾಕೀತನ್ನೂ ಮಾಡಿದರು ಬರೆಯದಂತೆ.

ಬದುಕಿಗೆ ಎದುರಾಗುವ ಸವಾಲುಗಳನ್ನು ಎದುರಿಸುವತ್ತ ಬೌಧ್ದಿಕ ದೃಢಚಿತ್ತತೆಯ ಅಗತ್ಯ ಇರುತ್ತದೆ ಮತ್ತು ಇದಕ್ಕಾಗಿ ಕಿರಿ ವಯಸ್ಸಿನ ಮಹಿಳೆಯರನ್ನು ಗಾಂಧೀಜಿ ಉಪಯೋಗಿಸಿಕೊಳ್ಳುತ್ತಿದ್ದರು ಎಂದು ಜಾಡ್ ಆಡಮ್ಸ್ ಹೇಳುತ್ತಾರೆ.

ಮಹಾನ್ ವ್ಯಕ್ತಿಗಳು ತಮ್ಮ ಕಾರ್ಯ ಸಿದ್ದಿ ಗಾಗಿ ತಮ್ಮದೇ ಆದ ಶೈಲಿಯಲ್ಲಿ ಕಾರ್ಯ ತಂತ್ರ ರೂಪಿಸಿಕೊಳ್ಳುತ್ತಾರೆ. ಕೆಲವೊಮ್ಮೆ ಅವು ನಮಗೆ ಆಭಾಸವಾಗಿ ಕಂಡರೂ ಮಹಾತ್ಮರಿಗೆ ಹಾಗೆ ತೋರುವುದಿಲ್ಲ. ಗಾಂಧೀಜಿ ತಮ್ಮಲ್ಲಿ ಆಗಾಗ ತಲೆಎತ್ತುತ್ತಿದ್ದ ಕಾಮ, ಕ್ರೋಧ, ಮದ, ಮತ್ಸರಗಳನ್ನು ಗೆಲ್ಲಲು ತಮ್ಮದೇ ಆದ ಮಾರ್ಗ ಅನುಸರಿಸಿದರು. ಉದಾಹರಣೆಗೆ, ಕೇವಲ ಉಪವಾಸ ಸತ್ಯಾಗ್ರಹದಿಂದ ತನ್ನ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟು ವಿಶ್ವವನ್ನು ದಂಗು ಬಿಡಿಸಿದ ಗಾಂಧೀಜಿಯ ಈ ಮಾರ್ಗವನ್ನು ಎಷ್ಟು ಜನ, ಎಷ್ಟು ಮಹನೀಯರು ಅನುಕರಿಸುತ್ತಿದ್ದಾರೆ? ಏಕೆಂದರೆ ಅಹಿಂಸಾತ್ಮಕ ಹೋರಾಟದಲ್ಲಿ ಗಾಂಧೀಜಿಗೆ ಬಲವಾದ ನಂಬಿಕೆ ಇತ್ತು ಮತ್ತು ಆ ನಂಬಿಕೆ ಅವರನ್ನು ಹುಸಿಗೊಳಿಸಲಿಲ್ಲ.

ಸಾವಿರಾರು ವರ್ಷಗಳಿಂದ ಮಾನವ ಸಂತತಿಯನ್ನು ಕಾಪಾಡುತ್ತಾ, ಉಳಿಸುತ್ತಾ ಬಂದಿರುವ ವೀರ್ಯದ ಶಕ್ತಿಯ ಬಗ್ಗೆ ಅಪಾರ ವಿಶ್ವಾಸವಿದ್ದ ಗಾಂಧೀಜಿ ಹೇಳಿದ್ದು, “ಗಂಡಿನಲ್ಲಿ ಹರಿಯುವ ಈ ದ್ರವವನ್ನು ಉಳಿಸಿಕೊಳ್ಳುವವರು ಅಜೇಯ ಶಕ್ತಿ ಪಡೆಯುವರು” ಎಂದು. ಗಾಂಧೀಜಿ ತಮ್ಮ ವೀರ್ಯವನ್ನು ಹಿಡಿದಿಟ್ಟು ಕಾಮವನ್ನು ಗೆಲ್ಲಲು ಯತ್ನಿಸಿ ಯಶಸ್ಸನ್ನು ಸಹ ಪಡೆದರೂ ತಮ್ಮ ಪ್ರೀತಿಯ ದೇಶ ಮಾತ್ರ ಇಬ್ಭಾಗವಾಗುವುದನ್ನು ಈ “ಪ್ರಯೋಗ” ದಿಂದ ತಡೆಗಟ್ಟಲು ಸಾಧ್ಯವಾಗದೆ ಇದ್ದದ್ದು ದೊಡ್ಡ ದುರಂತವೆಂದೇ ಹೇಳಬಹುದು.

ಚಿತ್ರ ಕೃಪೆ: ಇಂಗ್ಲೆಂಡಿನ ದಿನ ಪತ್ರಿಕೆ Independent