ಅಜ್ಜಿಯ ನೆನಪು

ಗೋರ್ಬಚೋಫ್ ೮೦ ನೆ ಜನ್ಮದಿನಾಚರಣೆಯ ಹುಮ್ಮಸ್ಸಿನಲ್ಲಿದ್ದಾರೆ. ವಿಶ್ವದ ಅತ್ಯಂತ VISIBLE LEADER ಗಳಲ್ಲಿ ಒಬ್ಬರಾಗಿದ್ದರು ಗೋರ್ಬಚೋಫ್. ೮೦ ರ ದಶಕದಲ್ಲಿ ಅಮೆರಿಕೆಯ ರೊನಾಲ್ಡ್ ರೇಗನ್, ರಷ್ಯದ ಗೋರ್ಬಚೋಫ್ ಸುದ್ದಿ ಮಾಡಿದ್ದೆ ಮಾಡಿದ್ದು. ರೊನಾಲ್ಡ್ ರೇಗನ್ ಒಬ್ಬ ಹಾಲಿವುಡ್ ನಟ. ಕೋಟಿಗಟ್ಟಲೆ ಜನರನ್ನು ತನ್ನ ಚಿತ್ರಗಳ ಮೂಲಕ ರಂಜಿಸಿದ ರೇಗನ್ ರಾಜಕಾರಣದಲ್ಲೂ ತಮ್ಮದೇ ಆದ ಛಾಪನ್ನು ಒತ್ತಿದ್ದರು. ರೇಗನ್ ಮತ್ತು ಗೋರ್ಬಚೋಫ್ ಮಧ್ಯೆ ಇದ್ದುದು ಒಂದು ಕಾಲದ ಧರ್ಮೇಂದ್ರ – ಹೇಮಾ ಮಾಲಿನಿ, ಸಲ್ಮಾನ್ – ಐಶ್ವರ್ಯ ನಡುವಿನ “ಕೆಮಿಸ್ಟ್ರಿ”. ಇವರುಗಳು ನಾಯಕರಾಗಿದ್ದ ಎರಡೂ ದೇಶಗಳೂ ಅಪನಂಬಿಕೆಯಿಂದ ತೊಳಲುತ್ತಿದ್ದರೆ ಇವರೀರ್ವರು ಮಾತ್ರ ಒಬ್ಬರನ್ನೊಬ್ಬರ ಕಾರ್ಯಶೈಲಿಯನ್ನು ಮೆಚ್ಚುತ್ತಾ ಒಂದು ಅಪೂರ್ವವಾದ ಸ್ನೇಹವನ್ನು ಹೆಣೆದಿದ್ದರು. ರೇಗನ್ ರವರು ಗೋರ್ಬಚೋಫ್ ರನ್ನು ಉದ್ದೇಶಿಸಿ Mr. Gorbachev, tear down this wall. ಬರ್ಲಿನ್ ಗೋಡೆ ಬಗ್ಗೆ ಅಮೆರಿಕೆಯ ಅಧ್ಯಕ್ಷ ನೊಬ್ಬ ಸೋವಿಯೆಟ್ ನಾಯಕನಿಗೆ ಈ ರೀತಿ ಸಂಬೋಧಿಸಿ ಹೇಳಬೇಕೆಂದರೆ ಮಾಮೂಲಿ ಕೆಲಸವಲ್ಲ. ಸಿನಿಮಾದ ಡಯಲಾಗ್ ಥರ ಹೊಡೆದೇ ಬಿಟ್ಟರು ರೇಗನ್ ವಿಶ್ವ ದಂಗಾಗುವಂತೆ.

ಗೋರ್ಬಚೋಫ್ ಮಾತು ಬಂತೆಂದರೆ ಗತಿಸಿಹೋದ ನನ್ನ ಪ್ರೀತಿಯ ಅಜ್ಜಿಯ ನೆನಪು ಬರುತ್ತದೆ. ಕನ್ನಡ ಭಾಷೆಯನ್ನ ಬಹು ಚೆನ್ನಾಗಿ ಮಾತನಾಡುತ್ತಿದ್ದ ಅವರು ತುಷಾರ, ಕಸ್ತೂರಿ, ಮಲ್ಲಿಗೆ, ಮಯೂರ, ಸುಧಾ ಮುಂತಾದ ಪತ್ರಿಕೆಗಳನ್ನು ತಪ್ಪದೆ ಓದುತ್ತಿದ್ದರು. ನನ್ನ ಅಜ್ಜಿಗೂ ನನ್ನ ಹಾಗೆಯೇ ವಿಶ್ವದ ಆಗುಹೋಗುಗಳ ಮೇಲೆ ಆಸಕ್ತಿ ಹೆಚ್ಚು. ಟೀವೀ ಪರದೆ ಮೇಲೆ ಗೋರ್ಬಚೋಫ್ ಕಾಣಿಸಿದ್ದೇ ತಡ ಕೇಳುತ್ತಿದ್ದರು, ಏನೋ ಅದು, ಅವನ ತಲೆ ಮೇಲೆ ಅದ್ಯಾವಾಗ ಕಾಗೆ ಕಕ್ಕ ಮಾಡಿತು ಎಂದು. ಗೋರ್ಬಚೋಫ್ ಅವರ ಕೂದಲಿಲ್ಲದ ನುಣ್ಣಗಿನ ತಲೆ ಮೇಲೆ ದೊಡ್ಡದಾದ ಮಚ್ಚೆ ಇತ್ತು. ಈ ಮಚ್ಚೆ world famous. ನೋಡಿದವರಿಗೆ ನನ್ನ ಅಜ್ಜಿಗೆ ತೋಚಿದಂತೆಯೇ ಕಾಗೆ ಕಕ್ಕ ಉದುರಿಸಿದ ಹಾಗೆ ಕಾಣುತ್ತಿತ್ತು. ಗೋರ್ಬಚೋಫ್ ರ ನೆನಪಾದಾಗ ಎರಡು ವರ್ಷಗಳ ಹಿಂದೆ ನಮ್ಮನ್ನು ಬಿಟ್ಟು ಹೋದ ಅಜ್ಜಿಯ ನೆನಪೂ ಸಹ ಬರುತ್ತದೆ.

ನಾಸ್ತಿಕನ ಬಾಯಲ್ಲಿ ದೇವರು

 

೮೦ ನೆ ಜನ್ಮ ದಿನವನ್ನು ಆಚರಿಸುತ್ತಿರುವ ಮಿಖಾಯಿಲ್ ಗೋರ್ಬಚೋಫ್ ಸೋವಿಎಟ್ ಒಕ್ಕೊಟವನ್ನು ಛಿದ್ರಗೊಳಿಸಿದ ಕೀರ್ತಿಗೆ ಭಾಜನರು. ಒಕ್ಕೂಟ ಮುರಿದು ಬೀಳುವವರೆಗೆ ಅಮೆರಿಕೆಗೆ ಕಮ್ಯುನಿಸ್ಟ್ ರಷ್ಯಾ ಎಂದರೆ ಒಂದು ರೀತಿಯ ನಡುಕ, ಭಯ. ೮೦ ರ ದಶಕದಲ್ಲಿ ಬಿರುಸಾಗಿ ನಡೆದ ಅಂತಾ ರಾಷ್ಟ್ರೀಯ ವಿದ್ಯಮಾನದಲ್ಲಿ ಅಮೇರಿಕಾ ಬರ್ಲಿನ್ ಗೋಡೆಗೂ ಒಂದು ಗತಿ ಕಾಣಿಸಿ ಸೋವಿಎಟ್ ಮೂರಾಬಟ್ಟೆ ಆಗಿಸುವಲ್ಲಿ ಯಶಸ್ಸನ್ನು ಕಂಡಿತು. ಈ ಯಶಸ್ಸಿಗೆ ಅಮೆರಿಕೆಯ ಕಪಟತನ ಕ್ಕಿಂತ ಒಂಚೂರು ಗೋರ್ಬಚೋಫ್ ಮತ್ತೊಂಚೂರು ಸಾಕ್ಷಾತ್ ಪರಮಾತ್ಮನೇ ಕಾರಣೀಕರ್ತರಾದರು. ದೇವರು ಯಾಕೆ ಬಂದ ಇಲ್ಲಿ ಎನ್ನುತ್ತೀರೋ? ಅಲ್ಲ, ಈ ವಿಶ್ವವನ್ನು, ಅಗಾಧ ಆಗಸವನ್ನು, ಗ್ರಹ, ಧೂಮಕೇತಾದಿಗಳನ್ನು, ನಂತರ ಇವುಗಳೆಲ್ಲವಕ್ಕೆ viceroy ಆಗಿ ಮನುಷ್ಯನನ್ನು ಸೃಷ್ಟಿಸಿ ಭೂಲೋಕಕ್ಕೆ ಕಳಿಸಿದ ತಪ್ಪಿಗೆ ರಷ್ಯಾದವರು ದೇವ ಸ್ಮರಣೆಯೇ ಬೇಡ ಎಂದರೆ  ಅವನಾದರೂ ಏಕೆ ಸುಮ್ಮನಿರಬೇಕು? ಗೋರ್ಬಚೋಫ್ ನನ್ನು ದಾಳವಾಗಿ ಉಪಯೋಗಿಸಿ ವಿಶ್ವದ ಮಹಾ ಶಕ್ತಿ ರಶ್ಯಾವನ್ನು ಬೀದಿಗೆ ತಂದು ನಿಲ್ಲಿಸಿಬಿಟ್ಟ ದೇವರು ಈಗಲಾದರೂ ನನ್ನ ಜಪ ಮಾಡುತ್ತಾ ಬಿದ್ದಿರಿ ಎಂದು.

ಆಫ್ಘಾನಿಸ್ತಾನದ ಯುದ್ಧದಲ್ಲಿ ತಲ್ಲೀನವಾದ ಅಮೆರಿಕೆಗೆ ಚಾರಿತ್ರಿಕ ಮತ್ತು ರಾಜತಾಂತ್ರಿಕ ತಿರುಗೇಟಾಗಿ ಪರಿಣಮಿಸಿದೆ ಆಫ್ಘನ್ ಯುದ್ಧ ಎಂದು ಗೋರ್ಬಚೋಫ್ ವಾದ. ಆಫ್ಘಾನಿಸ್ತಾನದಲ್ಲಿ ರಷ್ಯಾ ಬೆಂಬಲಿತ ಸರಕಾರವನ್ನು ಉರುಳಿಸಲು ಮುಜಾಹಿದೀನ್ಗಳನ್ನು ಹರಿಬಿಟ್ಟ ಅಮೆರಿಕೆಗೆ ಈಗ ಅದೇ ಮುಜಾಹಿದೀನ್ ಗಳೇ ಸವಾಲಾಗಿ ಪರಿಣಮಿಸಿರುವುದು ಒಂದು ರೀತಿಯ ಕಾಕತಾಳೀಯ ಬೆಳವಣಿಗೆ.” ನನ್ನ ಪ್ರಕಾರ ದೇವರು ತಪ್ಪು ಮಾಡುವವರನ್ನು ಶಿಕ್ಷಿಸಲು ತನ್ನದೇ ಆದ mechanism ಅನ್ನು ಬಳಸುತ್ತಾನೆ ಎಂದು ಗೋರ್ಬಚೋಫ್ ನುಡಿಯುತ್ತಾರೆ. ಕಮ್ಯುನಿಸ್ಟರೆಂದರೆ ನಮ್ಮ ಪ್ರಕಾರ ನಿರೀಶ್ವರವಾದಿಗಳು, ಗೋರ್ಬಚೋಫ್ ಒಬ್ಬ ಕಮ್ಯುನಿಸ್ಟ್. ಇವರ ಬಾಯಲ್ಲಿ ದೇವರ ಪ್ರಸ್ತಾಪವೇ? ಅಥವಾ ನಿರೀಶ್ವರವಾದಿಯಾಗಿದ್ದ ಗೋರ್ಬಚೋಫ್ ರ ಕೊರಳಿಗೆ ಅವರ ಮಿತ್ರ ಅಮೆರಿಕೆಯ ಅಧ್ಯಕ್ಷ ರೊನಾಲ್ಡ್ ರೇಗನ್ ಶಿಲುಬೆ ಕಟ್ಟಿಬಿಟ್ಟರೆ? ಏನೇ ಆದರೂ ಆಫ್ಘಾನಿಸ್ತಾನ ಮಾತ್ರ ಅಮೆರಿಕೆ ಮಟ್ಟಿಗೆ ನೀನೆ ಸಾಕಿದಾ ಗಿಳಿ, ನಿನ್ನಾ ಮುದ್ದಿನ ಗಿಳೀ, ಹದ್ದಾಗಿ ಕುಕ್ಕಿತಲ್ಲೋ….. ಆಗಿದ್ದಂತೂ ಗುನುಗಿಸಲೇಬೇಕಾದ ಬೇಕಾದ ಸತ್ಯವೇ.

ಚಿತ್ರ ಸೌಜನ್ಯ: independent ಪತ್ರಿಕೆ (UK)