ಎಲ್ಲರನ್ನೂ ಆದರಿಸೋಣ, ಎಲ್ಲವನ್ನೂ ಗೌರವಿಸೋಣ

ಹಿಂದೂ ದೇವರುಗಳ ಬಗ್ಗೆ ಅಸಹ್ಯವಾಗಿ, ಚಿತ್ರಿಸುವ ಚಾಳಿ ಕುರಿತು ಕನ್ನಡದ ಖ್ಯಾತ ಆನ್ ಲೈನ್ ತಾಣದಲ್ಲಿ ಒಬ್ಬರು ಖೇದ, ಆಕ್ರೋಶ ವ್ಯಕ್ತಪಡಿಸಿದ್ದರು. ಕಲೆಯ ಹೆಸರಿನಲ್ಲಿ, ಸೃಜನಶೀಲತೆಯ ಹೆಸರಿನಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಧಾರ್ಮಿಕ ಭಾವನೆಗಳನ್ನ ಕೆರಳಿಸುವುದು, ನಮ್ಬಿಕೆಗಳನ್ನು ಘಾಸಿಗೊಳಿಸುವುದು ತರವಲ್ಲ. ಸೃಜನಶೀಲತೆ ಅಥವಾ ಬೇರಾವುದಾದರೂ ಪ್ರತಿಭೆಯನ್ನು ಸಾಕಾರಗೊಳಿಸಲು ಹತ್ತು ಹಲವು ಮಾರ್ಗಗಳಿವೆ. ಧಾರ್ಮಿಕ ಭಾವನೆಗಳನ್ನು ಕೆರಳಿಸುವ, ಕಲೆ ಕುಚೋದ್ಯದಿಂದ ಕೂಡಿದ್ದು. ಈ ಕುಚೋದ್ಯ ಇಸ್ಲಾಮ್ ಧರ್ಮದ ಮೇಲೆ ಪ್ರಯೋಗವಾದಷ್ಟು ಬೇರಾವ ಧರ್ಮದ ಮೇಲೂ ಆಗಿರಲಾರದು. ಅಂಥ ಕಲೆಯನ್ನು ಮುಸ್ಲಿಮರು ಖಂಡಿಸಿದಾಗ ಅವರನ್ನು ಬೆಂಬಲಿಸಲು ಯಾರೂ ಇರಲಿಲ್ಲ. ಬದಲಿಗೆ ಮುಸ್ಲಿಮರಿಗೆ ಸಿಕ್ಕಿದ್ದು ಕಲೆಯ ಬಗ್ಗೆ, ಸೃಜನಶೀಲತೆಯ ಬಗ್ಗೆ, ಆಧುನಿಕ ಬದುಕಿನ ಬಗ್ಗೆ ಪಾಠ. ಚಿಕ್ಕತನವನ್ನು ಬಿಟ್ಟು ನೀವು ಬೆಳೆಯಬೇಕು ಎನ್ನುವ ಕಿವಿಮಾತು. ಈಗ ಅದೇ ಪಿಶಾಚಿ ತಮ್ಮ ಹೊಸ್ತಿಲಿಗೆ ಬಂದು ನಿಂತಾಗ ಜನ ಹೌಹಾರುತ್ತಿದ್ದಾರೆ. reactions strangely different.

೨೦೦೩ ರಲ್ಲಿ ಡ್ಯಾನಿಶ್ ವ್ಯಂಗ್ಯಚಿತ್ರಕಾರ “ಕ್ರಿಸ್ಟಫರ್ ಜೈಲರ್” ಯೇಸು ಕ್ರಿಸ್ತರ ಬಗೆಗಿನ ಕೆಲವು ಚಿತ್ರಗಳನ್ನ ಅಲ್ಲಿನ ಖ್ಯಾತ ಪತ್ರಿಕೆ Jyllands-Posten ಗೆ ಕಳಿಸಿದ. ಸಂಪಾದಕ ಈತನಿಗೆ ‘ಈ ಮೇಲ್’ ಕಳಿಸಿ ಈ ಚಿತ್ರಗಳನ್ನು ಕ್ರೈಸ್ತರು ನೋಡಿ ಆನಂದಿಸಲಿಕ್ಕಿಲ್ಲ ಮತ್ತು ಕ್ರೈಸ್ತರ ಭಾವನೆಗಳಿಗೆ ನೋವುಂಟು ಮಾಡುವುದರಿಂದ ಅದನ್ನು ಪ್ರಕಟಿಸಲು ಸಾಧ್ಯವಿಲ್ಲ ಎಂದು ವಿವರಿಸಿದ. ಇದೇ ಪತ್ರಿಕೆ ೨೦೦೫ ರಲ್ಲಿ ಪ್ರವಾದಿ ಮುಹಮ್ಮದರ ಕಾರ್ಟೂನ್ ಗಳನ್ನು ಪ್ರದರ್ಶಿಸಿ ತನ್ನ ಕೊಳಕು ‘ಡಬಲ್ ಸ್ಟ್ಯಾಂಡರ್ಡ್’ ಅನ್ನು ಸೊಗಸಾಗಿ ಪ್ರದರ್ಶಿಸಿತು.

ಧಾರ್ಮಿಕ ಕುರುಹುಗಳನ್ನು ನಮಗೆ ಬೇಕಾದ ಸ್ಥಳಗಳಲ್ಲಿ, ಬೇಕಾದ ರೀತಿಯಲ್ಲಿ ಬಳಸಿ ಕೊಂಡಾಗ ಅದರ ಬಗ್ಗೆ ಗೌರವ, ಭಕ್ತಿ ತಂತಾನೇ ಕಡಿಮೆಯಾಗುತ್ತದೆ. ಧರ್ಮ ವೈಯಕ್ತಿಕವಾಗಿರಬೇಕು. ಧಾರ್ಮಿಕ ಭಾವನೆ ಮನಸ್ಸಿನಲ್ಲಿ ನೆಲೆಯೂರಿರಬೇಕು. we should not wear our faiths on our sleeves. ಗಣೇಶನ ಮೂರ್ತಿಗಳನ್ನು ತೋಚಿದ ರೀತಿಯಲ್ಲಿ, ಬ್ಯಾಟ್ ಹಿಡಿದು ಕೊಂಡೂ ಮತ್ಯಾವುದಾದರೂ ರೀತಿಯಲ್ಲಿ ರೂಪಿಸಿದಾಗ ನಾವು ನೀಡುತ್ತಿರುವ ಸಂದೇಶವಾದರೂ ಏನು? ಈ ರೀತಿ ದೇವರ ಚಿತ್ರಗಳನ್ನು, ಇನ್ನಿತರ ಧಾರ್ಮಿಕ ಸಂಕೇತಗಳನ್ನು ಸಾರಾಸಗಟಾಗಿ ಕಲೆಯ ಹೆಸರಿನಲ್ಲಿ ದುರುಪಯೋಗ ಮಾಡಿಕೊಂಡಾಗ ಯಾವುದು ಸರಿ ಯಾವುದು ತಪ್ಪು ಎನ್ನುವ ವಿಂಗಡಿಸುವ ರೇಖೆ ಮಸುಕಾಗಿ ಬಿಡುತ್ತದೆ. ಆಗ ಸಮಸ್ಯೆಗಳು ಎದುರಾಗಲು ತೊಡಗುತ್ತವೆ.

ಮುಸ್ಲಿಮರಲ್ಲಿ ಯಾವುದೇ ಕೆಲಸ ಆರಂಭಿಸುವಾಗಲೂ ಕರುಣಾಮಯನೂ, ದಯಾಮಯನೂ ಆದ ಅಲ್ಲಾಹನ ನಾಮದಿಂದ (ಬಿಸ್ಮಿಲ್ಲಾ ಅರ್ರಹ್ಮಾನ್, ಅರ್ರಹೀಂ) ಎನ್ನುವ ಕುರಾನ್ ಸೂಕ್ತ ಉಪಯೋಗಿಸುತ್ತಾರೆ. ಈ ಸೂಕ್ತವನ್ನು ಕೆಲವರು ಪತ್ರ ಬರೆಯುವಾಗಲೂ ಇನ್ನಿತರ ಸ್ಥಳಗಳಲ್ಲೂ ಬಳಸುವುದನ್ನು ನೋಡಿದ ಧರ್ಮ ಗುರುಗಳು ಆಕ್ಷೇಪ ಮಾಡಿ ನಾವು ಬರೆದ ಕಾಗದ ಅದರ ಉಪಯೋಗ ಮುಗಿದ ನಂತರ ತಿಪ್ಪೆ ಸೇರುವುದರಿಂದ ಅಂಥ ಸ್ಥಳಗಳಲ್ಲಿ ಈ ಸೂಕ್ತ ಉಪಯೋಗಿಸಕೂಡದು ಎಂದು ನಿರ್ದೇಶಿಸಿದ್ದರು. ಹಾಗೆಯೇ ಕೊರಳಿಗೆ ಹಾಕಿ ಕೊಳ್ಳುವ ಸರದ ಲಾಕೆಟ್ ಗಳ ಮೇಲೆ ‘ಅಲ್ಲಾಹ್’ ಎಂದು ಬರೆಯುವುದನ್ನು ಬಹಳ ಜನ ಒಪ್ಪುವುದಿಲ್ಲ. ಏಕೆಂದರೆ ನಮ್ಮೊಂದಿಗೆ ಸರವೂ ಶೌಚ ಗೃಹ ಪ್ರವೇಶ ಮಾಡುವುದರಿಂದ ಅಲ್ಲಾಹನ ಹೆಸರಿನ ಪಾವಿತ್ರ್ಯಕ್ಕೆ ಧಕ್ಕೆ ಆಗಬಹುದು ಎಂದು ಬಗೆದು. ಇದು ಧಾರ್ಮಿಕ ಕುರುಹುಗಳನ್ನು ಕಾಪಾಡುವ ರೀತಿ.

ನಮ್ಮ ಧರ್ಮ ವೈಯಕ್ತಿಕ. ನಮ್ಮ ವೈಯಕ್ತಿಕ ವಿಷಯಗಳಲ್ಲಿ ಕೈ ಹಾಕಲು ಯಾರಿಗೂ ನಾವು ಅನುಮತಿಸುವುದಿಲ್ಲ. ಧರ್ಮಕ್ಕೂ ಅದೇ ನಿಲುವು ಅನ್ವಯವಾಗಲಿ. ಯಾರೂ ಯಾರ ಭಾವನೆಗಳನ್ನೂ ಘಾಸಿಗೊಳಿಸಲು ಹೋಗಬಾರದು. ಎಲ್ಲ ಧರ್ಮಗಳನ್ನೂ ಗೌರವಿಸುತ್ತಾ, ಆದರಿಸುತ್ತಾ ನಡೆದರೆ ಯಾವ ರೀತಿಯ ಸಮಸ್ಯೆಗಳೂ ಎದುರಾಗವು.

ತಿಳಿವಳಿಕೆಗೆ ಮತ್ತೊಂದಿಷ್ಟು ತಿಳಿಸಾರು

ಬದುಕಿನಲ್ಲಿ ಮನೆಯವರಿಂದ , ನೆಂಟರಿಂದ , ಮಿತ್ರರಿಂದ, ಸಹೋದ್ಯೋಗಿಗಳಿಂದ ಬಹಳಷ್ಟು ಕುಹಕಗಳನ್ನು, ಕಟು ಮಾತುಗಳನ್ನ ಕೇಳಿರುತ್ತೇವೆ. ನಿನ್ನ ಕೈಯ್ಯಿಂದ ಏನೇನೂ ಆಗದು, ನೀನು ದಡ್ಡ, ಮೂರ್ಖ, ಕೋಪಿಷ್ಠ, ನಿನ್ನನ್ನು ಕಂಡರೆ ಯಾರಿಗೂ ಆಗೋದಿಲ್ಲ್ಲ, ನಿನ್ನ ಮುಖ ನೋಡು, ಇನ್ನೂ ಸ್ವಲ್ಪ ಚೆನ್ನಾಗಿ, ನೋಡುವಂತಿದ್ದರೆ ಏನು ಮಾಡುತ್ತಿದ್ದೆಯೋ, ನೀನ್ಯಾಕೆ ಹೀಗೇ, ನೀನು “ಸ್ಟ್ರೇಂಜ್”,  “ವೀರ್ಡ್” ಹೀಗೇ ಸಾಗುತ್ತವೆ ಗುಣಗಾನಗಳು. ಇವನ್ನು ಒದರುವವರಿಗೆ ತಿಳಿದಿರುವುದಿಲ್ಲ ಈ ಮಾತುಗಳು ಮನಸ್ಸಿಗೆ ಮಾತ್ರವಲ್ಲ ನಮ್ಮ self worth ಮೇಲೂ ಯಾವ ಪರಿಣಾಮ ಬೀರುತ್ತವೆ ಎಂದು. ಕೆಲವರಿಗೆ ಟೀಕಿಸೋದರಲ್ಲೇ ಏನೋ ಒಂದು ಸುಖ, ನೆಮ್ಮದಿ. ಯಾರನ್ನಾದರೂ ಕಟು ಮಾತುಗಳಲ್ಲಿ ಹಳಿದ ಮೇಲೆ ಏನನ್ನೋ ಸಾಧಿಸಿದ ಹಾಗೆ. ಚೆನ್ನಾಗಿ ಉರ್ಕೊಂಡ ಎಂದು ಒಳಗೊಳಗೇ ಸಂತಸ. ಇನ್ನು ಕೆಲವರಿಗೆ ತಮ್ಮ ಕುಟುಕು ಮಾತು ಜನರಿಗೆ ನೋವುಂಟು ಮಾಡುತ್ತದೆ ಎನ್ನುವ ಪರಿವೆಯೂ ಇರುವುದಿಲ್ಲ. ಚೆನ್ನಾಗಿ ಬೊಗಳಿದ ನಂತರ ಬಾಲವನ್ನು ಕುಂಡೆ ಯಡಿಗೆ ಸೇರಿಸಿ ನಡೆಯುವ ನಾಯಿಯಂತೆ ಜಾಗ ಖಾಲಿ ಮಾಡುತ್ತಾರೆ.  

ಇಂಥ ತಿಳಿಗೇಡಿಗಳು, ಮತಿಹೀನರು, ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಳ್ಳದೆ ಇರುವುದೂ ಕೆಲವೊಮ್ಮೆ ಅಸಾಧ್ಯವೇ. ಹಾಗಾದ್ರೆ ಕೊರಗಿ ಕೊರಗಿ ಮನಸ್ಸು ಕೆಡಿಸಿಕೊಳ್ಳ ಬೇಕೋ? ಬೇಡ, ಅಂಥ ವ್ಯಕ್ತಿಗಳ ಸಹವಾಸವನ್ನು ನಿಲ್ಲಿಸುವುದು ಅಥವಾ ಕಡಿಮೆ ಮಾಡುವುದು ಮೊದಲನೆಯದಾಗಿ ಮಾಡಬೇಕಾದ ಕೆಲಸ. ಸ್ವತಃ ಮನೆಯವರೇ ಆದರೆ? ಅವರಿಗೆ ತಿಳಿ ಹೇಳೋದು ಕಷ್ಟವಾದರೂ ಜಾಣ್ಮೆಯಿಂದ, ನಾಜೂಕಿನಿಂದ ವಿವರಿಸಬೇಕು. ಆದರೆ ಆಗೊಮ್ಮೆ ಈಗೊಮ್ಮೆ ಸನ್ನಡತೆಯ, ಸ್ವೀಟ್ ನೇಚರ್ ನ ಜನರನ್ನೂ ನಾವು ಕಾಣುತ್ತೇವೆ. ಮುಕ್ತ ಕಂಠದಿಂದ ಹೊಗಳುವ, ಮೆಚ್ಚುಗೆ ವ್ಯಕ್ತಪಡಿಸುವ, ಒಳ್ಳೆಯ ಮಾತನ್ನಾಡುವ, ನಮ್ಮ ಮೇಲೆ ನಮಗೇ ಅಭಿಮಾನ ಮೂಡುವಂತೆ  ಮಾಡುವ ಜನರೂ ಇಲ್ಲದ್ದಿಲ್ಲ. ಅಂಥವರ ಸಹವಾಸ ಮನಸ್ಸಿಗೆ ಮುದ ನೀಡುತ್ತದೆ, ಅಂಥವರು ಆದರ್ಶ ಸಂಗಾತಿಗಳು. ಒಬ್ಬ ವ್ಯಕ್ತಿ ವ್ಯಾಯಾಮ ನಿರತನಾಗಿದ್ದಾಗ ಅವನ ಲಾಕರ್ ನಲ್ಲಿ ಅವನ ಸ್ನೇಹಿತ ಒಂದು ಚಿಕ್ಕ ಚೀಟಿಯನ್ನು ಇಟ್ಟು ಹೋಗಿರುತ್ತಾನೆ, ತೆರೆದು ನೋಡಿದಾಗ ಅದರಲ್ಲಿ ಹೀಗೇ ಬರೆದಿರುತ್ತದೆ;

“ಯಾವುದನ್ನೂ ಮನಸ್ಸಿಗೆ ಹಚ್ಚಿಕೊಂಡು ಕೊರಗಬೇಡ, ನೀನು ಜ್ಞಾನದಲ್ಲಾಗಲಿ, ಅನುಭವದಲ್ಲಾಗಲಿ ಕಡಿಮೆಯಲ್ಲ. ನೀನು ನಿಷ್ಠುರವಾಗಿ ಮಾತನಾಡಿದರೂ ಸತ್ಯವನ್ನೇ ನುಡಿಯುವೆ, ಕ್ರಿಯಾಶೀಲತೆ ಇದೆ ನಿನ್ನಲ್ಲಿ, ನೀನು ಮಾತಿಗೆ ತಪ್ಪುವವನಲ್ಲ, ನಿನ್ನಿಂದಾದ ಸಹಾಯ ಮಾಡಲು ನೀನು ಯಾವಾಗಲೂ ತಯಾರು. ನಿನ್ನದು ನಿನಗೇ ತಿಳಿಯದಷ್ಟು ಉನ್ನತ ಮೌಲ್ಯಗಳುಳ್ಳ ವ್ಯಕ್ತಿತ್ವ, ಇಂದಲ್ಲ ನಾಳೆ ಯಶಸ್ಸು ನಿನ್ನನ್ನು ಹುಡುಕಿಕೊಂಡು ಬಂದೆ ಬರುತ್ತದೆ”. ನಾವೆಂದಾದರೂ ನೊಂದ ಆತ್ಮಗಳಿಗೆ ಇಂಥ ಸಾಂತ್ವನದ ನುಡಿಗಳನ್ನು ಹೇಳಿದ್ದೇವೆಯೇ, ಬರೆದಿದ್ದೇವೆಯೇ?