ಯೇಗ್ದಾಗೆಲ್ಲಾ ಐತೆ..ಓದಲೇಬೇಕಾದ ಪುಸ್ತಕ

ಯೇಗ್ದಾಗೆಲ್ಲಾ ಐತೆ, ಪುಸ್ತಕವನ್ನು ಮಂಗಳೂರಿನ ಕನ್ನಡ ಪುಸ್ತಕ ಪ್ರದರ್ಶನದಲ್ಲಿದ್ದ ಮಳಿಗೆಯೊಂದರಿಂದ ಖರೀದಿಸಿದೆ. ಮಾರಿದ ವ್ಯಕ್ತಿ ಪುಸ್ತಕದ ಬಗ್ಗೆ ಪ್ರಶಂಸೆಯ ಮಾತುಗಳನ್ನು ಹೇಳಿದ್ದರಿಂದಲೂ, ಪುಸ್ತಕ ನಿರೀಕ್ಷೆಗೆ ನಿಲುಕದೆ ಇದ್ದರೆ ಹೋಗುವುದು ಐವತ್ತು ರೂಪಾಯಿ ತಾನೇ ಎನ್ನವ nonchalant ಧೋರಣೆಯಿಂದ ಪುಸ್ತಕವನ್ನ ಖರೀದಿಸಿದೆ. ಹಳ್ಳಿಯ ಮಾಸ್ತರರೊಬ್ಬರ ಅನುಭವ ಕಥನ ಈ ಪುಟ್ಟ ಪುಸ್ತಕ. ಗ್ರಾಮವೊಂದರಲ್ಲಿ ಯೋಗಿಯೊಬ್ಬನೊಂದಿಗಿನ ತಮ್ಮ ಸ್ನೇಹದ ಬಗ್ಗೆ, ತಮಗಾದ ಅನುಭವದ ಬಗ್ಗೆ ಸರಳವಾಗಿ ಬರೆದಿದ್ದಾರೆ.  

ಮುಕುಂದನ ಹಳ್ಳಿಯ ಈ ಸ್ವಾಮೀ ಒಬ್ಬ ಸರಳ ಸನ್ಯಾಸಿ. ಕಳ್ಳ ಸನ್ಯಾಸಿ, ಭಂಗಿ, ಗಾಂಜಾ ಸೇದುವವನು, “ಭಕ್ತರ ಮನೆಯ ಮುದ್ದೆ, ಬಸವಿ ಮನೆಯ ನಿದ್ದೆ”….   ಹೀಗೇ ವಿನಾಕಾರಣ ಪುರಾವೆಗಳಿಲ್ಲದೆ ಅವರನ್ನು ಜನ ತೆಗಳಿದರೂ (ಯಾರೋ ಹೇಳಿದ್ದನ್ನು, ಹೇಳಿ ಕೊಟ್ಟಿದ್ದನ್ನು ನಂಬಿ prejudiced ಆಗೋ ವಿದ್ಯಾ?ವಂತ ಸಮೂಹ ನಮ್ಮ ನಡುವೆ ಇರುವಾಗ ಗ್ರಾಮಸ್ಥರ ವರ್ತನೆ ಬಗ್ಗೆ ಅಚ್ಚರಿ ಪಡಬೇಕಿಲ್ಲ ) ಅದ್ಯಾವುದನ್ನೂ ಕಿವಿಗೆ ಹಾಕಿ ಕೊಳ್ಳದೆ ಮೇಷ್ಟ್ರು ತಮ್ಮ ಸ್ನೇಹವನ್ನು ಅವರೊಂದಿಗೆ ಮುಂದುವರೆಸುತ್ತಾ ಬದುಕು ಒಂದು ಒಂದು ಭ್ರಮೆ ಎಂದು ಕಂಡು ಕೊಳ್ಳುತ್ತಾರೆ. 

ಮುಕುಂದನ ಹಳ್ಳಿಯ ಸ್ವಾಮಿಗಳಿಗೆ ಬದುಕಿನ ಬಗ್ಗೆ ಸರಳವಾಗಿ, ಜನರ ದೈನಂದಿನ ಬದುಕಿನೊಂದಿಗೆ ತಳುಕು ಹಾಕಿ ವಿನೋದವಾಗಿ, ಮನದಟ್ಟಾಗುವಂತೆ ಹೇಳುವ ಸಾಮರ್ಥ್ಯ ತಮ್ಮ ಅಲೆದಾಟದಷ್ಟೇ ಸುಲಭ. ಒಮ್ಮೆ  ವ್ಯಕ್ತಿಯೊಬ್ಬ ಬಂದು ಯಾರೋ ಸತ್ತು ಹೋದರು ಎನ್ನುವ ಸುದ್ದಿಯನ್ನ ಇವರಿಗೆ ತಲುಪಿಸುತ್ತಾನೆ. ಸತ್ತು ಹೋದ ಎನ್ನುವ ಪದ ಕೇಳಿದ ಕೂಡಲೇ ಹೌಹಾರಿದಂತೆ ನಟಿಸಿದ ಸ್ವಾಮಿಗಳು, ಅದ್ಹೇಗಯ್ಯಾ, ಅವನೆಲ್ಲಾದರೂ ಸತ್ತು ಹೋಗಲು ಸಾಧ್ಯವೇ ಎಂದು ಕೇಳುತ್ತಾರೆ. ಸ್ವಾಮಿಗಳ ಈ ಪ್ರಶ್ನೆಯ ಮರ್ಮ ಅರಿಯದ ಹಳ್ಳಿಗ ಮತ್ತಷ್ಟು ವಿವರಿಸುತ್ತಾನೆ. ಆದರೂ ಸ್ವಾಮಿ ಜಪ್ಪಯ್ಯ ಅನ್ನುವುದಿಲ್ಲ. ಎಲ್ಲಾದರೂ, ಯಾರಾದರೂ ಸತ್ತು ಹೋಗೋದಿದೆಯೇ? ಇಷ್ಟೆಲ್ಲಾ ವರ್ಷ ಬಾಳಿ  ಬದುಕಿದವನು ಅಷ್ಟು ಸಲೀಸಾಗಿ “ಸತ್ತು ಹೋಗು” ವನೆ? ಎಂದು ಕೇಳಿ ಅವನನ್ನು ಮತ್ತಷ್ಟು ಗಲಿಬಿಲಿಗೊಳಿಸುತ್ತಾರೆ.  “ಸತ್ತು ಹೋಗು’ ಎನ್ನುವ ಪದದ ಹಿಂದಿನ ಗೂಢಾರ್ಥವನ್ನು ಸ್ವಾಮಿಗಳಂಥ ವರಿಗೆ ಅರಿಯುವುದು ಸುಲಭ. ಉಸಿರಾಟ ನಿಂತು ಬಿಟ್ಟರೆ ಅವನು ಸತ್ತ ಎಂದು ಬಗೆಯುವ ಹಳ್ಳಿಯ ನಿರಕ್ಷರ ಕುಕ್ಷಿಗೆ ಹೇಗೆ ತಾನೇ ತಿಳಿಯಬೇಕು ಸಾವು ಮತ್ತೊಂದು ಬದುಕಿನೆಡೆಗಿನ ಪಯಣ ಎಂದು ? ಹೌದಲ್ಲವೇ? ದೀರ್ಘಾವಧಿ ಬಾಳಿ ಬದುಕಿದ  ಮಾಡಬೇಕಾದ್ದನ್ನೂ, ಮಾಡಬಾರದ್ದನ್ನೂ ಎಲ್ಲಾ ಮಾಡಿದ ಮನುಷ್ಯ ಸದ್ದಿಲ್ಲದೇ “ಸತ್ತು ಹೋಗಲು” ಹೇಗೆ  ಸಾಧ್ಯ? ಬದುಕಿನ ಮತ್ತು ಸಾವಿನ ನಿಜರೂಪವನ್ನು ಸ್ವಾಮಿಗಳು ಲೀಲಾಜಾಲವಾಗಿ ನಗುತ್ತಾ ಹಾಸ್ಯದಿಂದ ವಿವರಿಸುತ್ತಾರೆ ಸಾವಿನ ಸುದ್ದಿ ತಂದಾತನಿಗೆ.

ನದಿಯಲ್ಲಿ ನೀರಿನ ಹರಿವನ್ನು ನೋಡುತ್ತಾ, ಅದರೊಂದಿಗೆ ಹೊರಡುವ ನೀರ ಗುಳ್ಳೆಗಳೂ ಸ್ವಾಮಿಗಳ ಆಸಕ್ತಿ,  ಕಲ್ಪನೆಯನ್ನು ಹಿಡಿದಿಡುತ್ತವೆ. ಕ್ಷಣ ಮಾತ್ರ ಬದುಕುವ ಆ ಗುಳ್ಳೆಗಳ ಹಿಂದಿನ ಮರ್ಮವನ್ನೂ, ನಮ್ಮ ಬದುಕಿನ ಟೊಳ್ಳುತನ ದೊಂದಿಗೆ ಹೋಲಿಸಿ ಗಾಂಭೀರ್ಯ ಮಿಳಿತ ನಗುವಿನೊಂದಿಗೆ ಬಿಡಿಸಿ ಹೇಳುತ್ತಾರೆ. ಒಟ್ಟಿನಲ್ಲಿ ಒಂದು ಚೆಂದದ ಪುಟ್ಟ ಪುಸ್ತಕ.  ಒಂದು ರೀತಿಯಲ್ಲಿ reader’s digest ಓದಿದ ಹಾಗುತ್ತದೆ ಸ್ವಾಮಿಗಳ ಮಾತು, ಅನುಭವ ನೋಡಿದಾಗ. ಇಂಥ ನಿಸ್ವಾರ್ಥಿ ಸಾಧಕರಿಂದಲೇ ಇರಬೇಕು ನಮ್ಮ ಸಮಾಜ ಒಳ್ಳೆಯತನವನ್ನು ತನ್ನಲ್ಲಿ ಇನ್ನೂ ಉಳಿಸಿಕೊಂಡು ಬರುತ್ತಿದೆ. ಆದರೆ ಇವರುಗಳ ಸಂಖ್ಯೆ ಕ್ಷೀಣಿಸುತ್ತಿರುವುದೂ ಸಹ ತುಂಬು ಬದುಕು ಸಾಗಿಸಿದ ಸ್ವಾಮಿಗಳ ಮಾತುಗಳಷ್ಟೇ ಸತ್ಯ.

ಮನುಷ್ಯರೆಲ್ಲರೂ ಸಮಾನರು ಎಂದು ಸ್ವಾಮಿಗಳು ಹೇಳುವ ರೀತಿ ಇಲ್ಲಿದೆ ನೋಡಿ;

“ಊರು ಕೇರಿ, ಕುಲ ಗೋತ್ರ ಹೆಣ್ಣು ಗಂಡು ಎಲ್ಲಾ ಇಂಗಡಿಸ್ತಾರೆ. ನಾವು ಶಿವಾಚಾರ್ದೋರು, ನಾವು ದೇವಾಂಗ ದೋರು, ನಾವ್ ಬ್ರಾಮಣರು, ಅದರಾಗ್ ಮತ್ತೆ ನಾಮ್ದೋರು, ಅಡ್ಡ ಗಂಧದೋರು, ಮುದ್ರೆರು, ಅವ್ರು ಇವ್ರು ಒಬ್ಬರನ್ನ ಕಂಡ್ರೆ ಒಬ್ರು ಮಾರು ದೂರ ಹೋಗ್ತಾರೆ. ಮಾಡಿ ಮೈಲಿಗೆ ಅಂತಾರೆ, ನಗು ಬರ್ತೈತೆ……..ಈ ಮುದ್ರೆ, ವಿಭೂತಿ ಎಲ್ಲಾ ಅಷ್ಟೇ. ಬಾರೆ ಹೊರಗಳ ಯಾಪಾರ ಹಿಡಿದು ಬಡಿದಾಡ್ತಾರೆ” ಈ ಮಾತನ್ನು ಆಧುನಿಕ ಸ್ವಾಮಿಗಳಿಗೆ ಕೇಳಿಸಿದರೆ ಯಾವ ಉತ್ತರ ಸಿಗಬಹುದೋ?    

ಸ್ವಾಮಿಗಳ  ಕೆಲವೊಂದು ಸಂಗತಿಗಳು ಉತ್ಪ್ರೇಕ್ಷೆ ಎಂದು ತೋರಿದರೂ ಈ ಭಾವನೆ ಮತ್ತು ದಂತ ಕಥೆಗಳು ದೇವ ಮಾನವರಿಗೆ ಜನ ಅಂಟಿಸಿಯೇ ತೀರುತ್ತಾರೆ. ಅವನು ಕುಡುಕ, ಭಂಗಿ, ಗಾಂಜಾ ಹಾಕುವವನು ಎಂದೆಲ್ಲಾ ಜರೆಯುವ ಅದೇ ಬಾಯಿ ಅವರ ಪವಾಡಗಳ ಬಗ್ಗೆಯೂ ಭಯ ಭಕ್ತಿಯಿಂದ ಮಾತನಾಡುತ್ತಾರೆ, ಅದೇ ಸೋಜಿಗ.

ಹಳ್ಳಿಗಳಲ್ಲಿ ಈಗ ಅಪರೂಪವಾಗುತ್ತಿರುವ ಸಾಮರಸ್ಯದ ಜೀವನ ಸಹ ಈ ಮೇಷ್ಟರ ನೆನಪಿನಂಗಳದಿಂದ ಮರೆಯಾಗುವುದಿಲ್ಲ. ಮುಸ್ಲಿಮರಾದರೂ ಹಯಾತ್ ಸಾಹೇಬರು ಹಳ್ಳಿಯಲ್ಲಿನ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೊಡುತ್ತಿದ್ದ ಸಹಾಯ, ಗ್ರಾಮಸ್ಥರ ಮೂಢ ನಂಬಿಕೆಗಳು ಹೀಗೇ ಹತ್ತು ಹಲವು ವಿಚಾರಗಳನ್ನು ಜೋಪಾನದಿಂದ ಓದುಗರಿಗಾಗಿ ಕಾಯ್ದುಕೊಂಡು ನಮ್ಮ ಕೈಗಳಿಗರ್ಪಿಸಿದ ಕೃಷ್ಣ ಶಾಸ್ತ್ರಿಗಳು ಮಹದುಪಕಾರವನ್ನೇ ಮಾಡಿದ್ದಾರೆ ಈ ಪುಸ್ತಕ ಬರೆಯುವ ಮೂಲಕ. ಈ ಪುಸ್ತಕ ಆಂಗ್ಲ ಭಾಷೆಗೆ ತರ್ಜುಮೆಗೊಂಡಿದೆಯೋ ಗೊತ್ತಿಲ್ಲ. ತರ್ಜುಮೆ ಆಗದ ಪಕ್ಷದಲ್ಲಿ ಯಾರಾದರೂ ಈ ಮಹತ್ಕಾರ್ಯಕ್ಕೆ ಕೈ ಹಾಕಿದರೆ ಈ ಪುಸ್ತಕ ಹಿಟ್ ಆಗುವುದರಲ್ಲಿ ಸಂಶಯವಿಲ್ಲ.   

ಒಬ್ಬ ನಿರಕ್ಷರಕುಕ್ಷಿ ಆದರೆ ಬದುಕಿನ ನಿಜವಾದ ಪಾಠದಲ್ಲಿ ಅದ್ವಿತೀಯ professor ಆದ ಸ್ವಾಮಿಯೊಬ್ಬರ ಪರಿಚಯ ನನ್ನಲ್ಲಿ ಒಂದು ಅವರ್ಣನೀಯವಾದ ಭಾವವನ್ನೇ ಸೃಷ್ಟಿಸಿತು. ರಾಜಕಾರಣಿಗಳ ಒಡನಾಟದಿಂದ ನಾಡಿನ ಸಂಪನ್ಮೂಲ ಲೂಟಿ ಮಾಡುವ ಕೆಲವು ಸ್ವಾಮಿಗಳಿಗೂ ಈ ಮುಕುಂದೂರಿನ ಸ್ವಾಮಿಗೂ ಎತ್ತಣ ಸಂಬಂಧ ಎಂದು ತೋರಿದರೂ ಆಶ್ಚರ್ಯವಿಲ್ಲ. ಒಬ್ಬ ಅಹಂಕಾರಿ, ಸ್ವಾಮಿಯೊಬ್ಬ ತನ್ನ ಮಠಕ್ಕೆ ಬಂದು ಪೊಗರು ತೋರಿಸಿದರೂ ತನ್ನ ಸಂಸ್ಕೃತಿ ಕಲಿಸಿದ ವಿನಯ ವಿಧೇಯತೆ ಯನ್ನ ಮೋಹಕವಾಗಿ ಪ್ರದರ್ಶಿಸಿ ಮನಃಪೂರ್ವಕ ಆ ಸ್ವಾಮಿಯ ಸೇವೆ ಮಾಡುವ ಇವರ ಉದಾತ್ತ ಸಂಸ್ಕಾರ ನಮ್ಮನ್ನು ನಿಬ್ಬೆರಗಾಗಿಸುತ್ತದೆ. ಅಹಂಕಾರಿಗೆ ಅಹಂಕಾರವೇ ಉತ್ತರ ಎನ್ನುವ ನಮಗೂ ಆ ಸ್ವಾಮಿಗೂ ಇರುವ ವ್ಯತ್ಯಾಸ ನೋಡಿ.

ನನ್ನ ಆಸಕ್ತಿಯನ್ನು ಈ ಪುಟ್ಟ ಪುಸ್ತಿಕೆ ಈ ರೀತಿ ಹಿಡಿದಿಡುತ್ತದೆ ಎಂದು ಪುಸ್ತಕ ಕೊಂಡಾಗ ನನಗನ್ನಿಸಿರಲಿಲ್ಲ. ಸಾಧು ಸಂತರ ಬಗ್ಗೆ ದೊಡ್ಡ ಒಲವು ಆಸಕ್ತಿ ಇಲ್ಲದ ನನಗೆ ಒಬ್ಬ ಸಾಧಾರಣ, ಪ್ರಚಾರ ಫಲಾಪೇಕ್ಷೆ ಬೇಡದ ಸ್ವಾಮಿಯೊಬ್ಬರ ಪರಿಚಯ ಆದದ್ದು ಒಂದು ಅಪರೂಪದ ಅನುಭವವೇ ಸರಿ. ಕೊನೆಯದಾಗಿ ಇಲ್ಲಿದೆ ಮತ್ತೊಂದು ಬದುಕನ್ನು ಸಕರಾತ್ಮಕವಾಗಿ ಕಾಣಬೇಕೆಂದು ಹೇಳುವ ಮಾತು.

ಒಮ್ಮೆ ತನ್ನ ಮೂರು ವರ್ಷದ ಮಗು ಗುಲಾಬಿ ಕೀಳಲು ಗಿಡದ ಕಡೆ ಹೋಗುತ್ತಿದ್ದನ್ನು ಕಂಡ ಮಗುವಿನ ತಾಯಿ “ಅಯ್ಯೋ, ಅಯ್ಯೋ, ಮುಳ್ಳು, ಮುಳ್ಳು, ಮುಟ್ಟಬೇಡ ಎಂದು ಮಗುವನ್ನು ತಡೆದುದನ್ನು ಕಂಡ ಸ್ವಾಮಿಗಳು ಹೇಳಿದ್ದು, ಅಮ್ಮಯ್ಯಾ, ಆ ಮಗುವಿಗೆ ಹೂವಿನ ಗಿಡದಾಗೆ ಮುಳ್ಳು ಐತೆ ಅಂತ ಹೇಳ್ಕೊಡಬ್ಯಾಡ, ಮುಳ್ಳಿನ ಗಿಡ್ಯಾಗೆ ಹೂ ಐತೆ ಅಂತ ಹೇಳ್ಕೊಡಬೇಕು ಎಂದು ನಗುತ್ತಾ ಹೇಳುತ್ತಾರೆ. ಈ ಮಾತು ನಾವು ಕಲಿತ “half glass full” ಗಿಂತ ಮನೋಹರವಾಗಿಲ್ಲವೇ?

ವ್ರತಾಚರಣೆಯ ಮಾಸ

ರಮದಾನ್, (ರಂಜಾನ್ ಎಂದೂ ಕರೆಯಲ್ಪಡುತ್ತದೆ, ramzan) ಇಸ್ಲಾಮೀ ಪಂಚಾಂಗದ ಒಂಭತ್ತನೆ ತಿಂಗಳು ಮತ್ತು ಇಸ್ಲಾಮಿನ ಐದು ಸ್ಥಂಭಗಳಲ್ಲಿ ಮೂರನೆಯ ಸ್ಥಂಭವಾದ ರಮದಾನ್ ತಿಂಗಳಿನಲ್ಲಿ ಜಗತ್ತಿನ ಮುಸ್ಲಿಮರು ದಿನವಿಡೀ ಉಪವಾಸವಿದ್ದು ವಿಶೇಷ ಆರಾಧನೆಯಲ್ಲೂ, ಪವಿತ್ರ ಕುರಾನ್ ಪಾರಾಯಣದಲ್ಲೂ ತಮ್ಮ ಸಮಯ ಕಳೆಯುತ್ತಾರೆ. ಈ ಕಾರಣಕ್ಕಾಗಿ ಈ ಮಾಸವನ್ನು ದಾನದ, ಧ್ಯಾನದ ಮತ್ತು ಚಿಂತನೆಯ ಮಾಸವೆಂದು ಕರೆಯುತ್ತಾರೆ (month of charity, contemplation, and reflection). ಚಂದ್ರ ದರ್ಶನದೊಂದಿಗೆ ಆರಂಭವಾಗುವ ೩೦ ದಿನಗಳ ಈ ಉಪವಾಸ ವ್ರತ ಮುಸ್ಲಿಮ್ ಜಗತ್ತಿಗೆ ಹೊಸ ಚೈತನ್ಯವನ್ನೂ, ಧಾರ್ಮಿಕತೆಯನ್ನೂ ತುಂಬುತ್ತದೆ.

ನಮ್ಮನ್ನು ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸುವುದಕ್ಕೆ, ಪ್ರಾಮುಖ್ಯತೆ ಹೆಚ್ಚು. ಯಾವುದೇ ಪರಿಸ್ಥಿತಿಯಲ್ಲೂ ಐದು ಹೊತ್ತಿನ ನಮಾಜನ್ನು ನಿರ್ವಹಿಸಲೇಬೇಕು. ನಮಾಜ್ ಜೊತೆಗೆ ಕುರಾನ್ ಸೂಕ್ತಗಳನ್ನು ಪಠಿಸುವುದು, ಹಜ್ ಯಾತ್ರೆ, ಇವೂ ಸಹ ಆರಾಧನೆಯಲ್ಲೇ ಒಳಗೊಳ್ಳುತ್ತದೆ. ಆದರೆ ನಮಾಜ್, ಕುರಾನ್ ಪಠಣ, ಹಜ್ ಇತ್ಯಾದಿಗಳು  ತೋರಿಕೆಯ ಆರಾಧನೆಯಾಗಿಯೂ ಮಾರ್ಪಡಬಹುದು. ನಾನು ಧರ್ಮಿಷ್ಠ ಎಂದು ತೋರಿಸಲು ಎಲ್ಲರಿಗೂ ಕಾಣುವಂತೆ ಮಸ್ಜಿದ್ ಗೆ ಹೋಗುವುದು, ಹಜ್ ಯಾತ್ರೆ ಮಾಡುವುದು ಹೀಗೆ. ಆದರೆ ವ್ರತಾಚಾರಣೆ ಹಾಗಲ್ಲ. ಇದೊಂದು ರಹಸ್ಯ ಆರಾಧನೆ. ಉಪವಾಸವಿರುವವನ ಮತ್ತು ಅವನ ಪ್ರಭುವಿಗೆ ಮಾತ್ರ ತಿಳಿಯುವ ಆರಾಧನೆ. ಮೂರನೆಯ ವ್ಯಕ್ತಿಗೆ ಇದರ ಅರಿವಿರುವುದಿಲ್ಲ; ಹಾಗಾಗಿ ವ್ರತಾಚರಣೆಗೆ ಹೆಚ್ಚು ಮಹತ್ವ.    

ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದವರೆಗೆ ಉಪವಾಸದ ಅವಧಿ. ಅರುಣೋದಯದ “ಪ್ರಾರ್ಥನೆಯ ಕರೆ” ( “ಅದಾನ್” ) ಕಿವಿಗೆ ಬಿದ್ದ ಕೂಡಲೇ ಆಹಾರ, ಪಾನೀಯಗಳು ನಿಷಿದ್ಧವಾಗುತ್ತವೆ. ಅದೇ ರೀತಿ ಸೂರ್ಯಾಸ್ತದ ಪ್ರಾರ್ಥನೆಯ ಕರೆ ಕೇಳಿದ ಕೂಡಲೇ ಸ್ವಲ್ಪ ನೀರು ಮತ್ತು ಖರ್ಜೂರದ ಸಹಾಯದಿಂದ ಉಪವಾಸವನ್ನು ಕೊನೆಗೊಳಿಸಲಾಗುತ್ತದೆ. ಇಡೀ ದಿನದ ಉಪವಾಸದಿಂದ ಶರೀರದ ಮೇಲೆ ಹೆಚ್ಚು ವ್ಯತಿರಿಕ್ತ ಪರಿಣಾಮ ಆಗಬಾರದು ಎಂದು ಮಧ್ಯ ರಾತ್ರಿಯ ನಂತರ ಅಥವಾ ಅರುಣೋದಯದ ಸ್ವಲ್ಪ ಮೊದಲು ಸ್ವಲ್ಪವಾದರೂ ಆಹಾರ (ಇದಕ್ಕೆ “ಸುಹೂರ್” ಎಂದು ಕರೆಯುತ್ತಾರೆ) ತೆಗೆದು ಕೊಳ್ಳಲೇಬೇಕು. ಅದೇ ರೀತಿ ದಿನವಿಡೀ ಒಂದು ತೊಟ್ಟೂ ನೀರಿಲ್ಲದೆ, ತಮ್ಮ ದಿನಚರಿಗೆ ಯಾವುದೇ ಧಕ್ಕೆ ಬಾರದಂತೆ ತಮ್ಮ ಕೆಲಸ, ಧಂಧೆ ಮಾಡುತ್ತಾ ಉಪವಾಸವಿದ್ದು ಸೂರ್ಯಾಸ್ತಕ್ಕೆ ಒಂದು ಗುಟುಕು ನೀರು ಮತ್ತು ಒಂದು ತುಂಡು ಖರ್ಜೂರದ ಸಹಾಯದಿಂದ ಉಪವಾಸ ಕೊನೆಗೊಳಿಸುವುದಕ್ಕೆ  “ಇಫ್ತಾರ್” ಎಂದು ಕರೆಯುತ್ತಾರೆ. ಇಫ್ತಾರ್ ಪದವನ್ನು ತಾವು ಕೇಳಿರಲೇಬೇಕು, ನಮ್ಮ ರಾಜಕಾರಣಿಗಳು ಮುಸ್ಲಿಂ ಗೆಳೆಯರಿಗೆ ಏರ್ಪಡಿಸುವ ಔತಣ. ಪ್ರಾಯಕ್ಕೆ ಬಂದ ಪ್ರತೀ ಮುಸ್ಲಿಮ್ ಉಪವಾಸ ವ್ರತ ಆಚರಿಸಲೇಬೇಕು ಎಂದು ಕಡ್ಡಾಯವಾದ ನಿಯಮ. ಖಾಯಿಲೆಯಿಂದ ಬಳಲುವವರಿಗೆ ಮತ್ತು ಯಾತ್ರಿಗಳಿಗೆ ಇದರಿಂದ ವಿನಾಯಿತಿ ಇದ್ದು ಯಾತ್ರೆ ಮುಗಿದ ನಂತರ, ಮತ್ತು ಖಾಯಿಲೆಯಿಂದ ಗುಣಮಮುಖರಾದ ನಂತರ ತಪ್ಪಿಹೋದ ಉಪವಾಸ ದಿನಗಳನ್ನು ಉಪವಾಸ ಇರುವ ಮೂಲಕ ತೀರಿಸಬೇಕು,ಅದೂ ಸಾಧ್ಯವಾಗದಿದ್ದರೆ ತಪ್ಪಿ ಹೋದ ದಿನಗಳಿಗೆ ಪ್ರಾಯಶ್ಚಿತ್ತವಾಗಿ ಬಡ ಬಗ್ಗರಿಗೆ ಅನ್ನದಾನ ಮಾಡಬೇಕು.

ರಮದಾನ್ ಮಾಸದ ಮಹತ್ವದ ಬಗ್ಗೆ ಹೇಳುತ್ತಾ ಪ್ರವಾದಿಗಳು ಹೇಳಿದ್ದು, ರಮದಾನ್ ಮಾಸ ೭೦,೦೦೦ ತಿಂಗಳು ಗಳಿಗೆ ಸಮಾನ ಎಂದು. ಅದೂ ಅಲ್ಲದೆ ಇದೇ ತಿಂಗಳಿನಲ್ಲಿ ಪವಿತ್ರ ಕುರಾನ್ ನ ಸೂಕ್ತಗಳು ಅವತೀರ್ಣವಾಗಿದ್ದು.  ಈ ಕಾರಣಕ್ಕಾಗಿ ಜಗದಾದ್ಯಂತ ಮುಸ್ಲಿಮರು ಈ ತಿಂಗಳ ತಮ್ಮ ಬಿಡುವಿನ ವೇಳೆಯಲ್ಲಿ ಮತ್ತು ಹೆಚ್ಚು ಸಮಯ ಕುರಾನ್ ಪಾರಾಯಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಹಾಗೆಯೆ ಈ ತಿಂಗಳಿನಲ್ಲಿ ರಾತ್ರಿಯಲ್ಲಿ “ತರಾವೀಹ್” ಎಂದು ಕರೆಯಲ್ಪಡುವ ವಿಶೇಷ ಪ್ರಾರ್ಥನೆಗಳು ಸಹ ನಡೆಯುತ್ತವೆ. ಪ್ರತೀ ಆರಾಧನೆ, ದಾನ, ಒಳ್ಳೆಯ ಮಾತು, ಕೃತಿ ಇವುಗಳಿಗೆ ಪ್ರತಿಫಲ ಸಹ ೭೦,೦೦೦ ಪ್ರತಿಫಲದ ರೀತಿಯಲ್ಲಿ ದೇವರು ಕೊಡುವನೆಂದೂ ಮುಸ್ಲಿಮ್ ವಿಧ್ವಾಂಸರು ಹೇಳುತ್ತಾರೆ.      

ರಮದಾನ್ ತಿಂಗಳಿನಲ್ಲಿ ನಾವು ಮಾಡುವ ಪ್ರತೀ ಕೆಲಸವೂ ಇಸ್ಲಾಮೀ ಆದರ್ಶಗಳಿಗೆ ಪೂರಕವಾಗಿರಬೇಕೆಂದು ವಿಧ್ವಾಂಸರುಗಳು ಎಚ್ಚರಿಸುತ್ತಾರೆ. ಈ ಮಾಸದಲ್ಲಿ ಉದ್ರೇಕ ಪಡುವುದಾಗಲೀ,ಕೆರಳುವುದಾಗಲೀ ಮಾಡಬಾರದು. ಹಾಗೇನಾದರೂ ಯಾರಾದರೂ ಉದ್ರೇಕಿಸಿದರೆ “ನಾನು ವ್ರತಾಚರಣೆ ಮಾಡುತ್ತಿದ್ದೇನೆ” ಎಂದು ಹೇಳಿ ಮೌನವಾಗಿರಬೇಕು ಎಂದು ಸಲಹೆ ನೀಡುತ್ತಾರೆ. ಜ್ಞಾನಾರ್ಜನೆ, ಮತ್ತು ಸಂಯಮ ಪಾಲನೆ ರಮದಾನ್ ತಿಂಗಳ ವೈಶಿಷ್ಟ್ಯ ಎನ್ನಬಹುದು. ವ್ರತಾಚರಣೆಯ ಮೂಲಕ ರಮದಾನ್ ತಿಂಗಳು ನಮಗೆ “ಸ್ವ ನಿಗ್ರಹ” ದ ಗುಣವನ್ನೂ, ಸಂಯಮ ಶೀಲತೆಯನ್ನೂ ಕಲಿಸುತ್ತದೆ. ಈ ತೆರನಾದ ನಡವಳಿಕೆ ಮುಸ್ಲಿಮರು ಬರೀ ರಮದಾನ್ ಮಾಸಕ್ಕೆ ಸೀಮಿತಗೊಳಿಸದೆ ತಮ್ಮ ಬದುಕಿನ ಪ್ರತೀ ಘಳಿಗೆಯಲ್ಲೂ ಪಾಲಿಸಿದರೆ ದೇವರು ಯಶಸ್ಸನ್ನು ದಯಪಾಲಿಸುತ್ತಾನೆ ಸಮಾಜಕ್ಕೆ ಆದರ್ಶಪ್ರಾಯನಾಗಿ ಬದುಕುತ್ತಾನೆ.  

ಪ್ರತೀ ಮುಸ್ಲಿಂ ಮನೆಯಲ್ಲೂ ರಮದಾನ್ ಒಂದು ವಿಶೇಷ ತಿಂಗಳಾಗಿರುತ್ತದೆ. ಅದರಲ್ಲೂ ಮಕ್ಕಳಿಗೆ ಒಂದು ರೀತಿಯ ಸಂತಸ. ಐದು ವರ್ಷದ ಮೇಲ್ಪಟ್ಟ ಮಕ್ಕಳೂ ಸಹ ಪೂರ್ತಿ ತಿಂಗಳಲ್ಲದಿದ್ದರೂ ಸಾಧ್ಯವಾದಷ್ಟು ದಿಂದ ಉಪವಾಸ ಆಚರಿಸಲು ಯತ್ನಿಸುತ್ತಾರೆ. ನನ್ನ ಆರು ವರ್ಷದ ಮಗ ಕಳೆದ ಎರಡು ವರ್ಷಗಳಿಂದ ೮ – ೧೦ ದಿನ ಉಪವಾಸವಿದ್ದನು. ಸಂಜೆಯಾಗುತ್ತಿದ್ದಂತೆ ಮಕ್ಕಳು ಕಾತುರದಿಂದ ಮಸ್ಜಿದ್ ಗಳ ಗೋಪುರಗಳು ಹೊರಡಿಸುವ ಅದಾನ್ ಗಾಗಿ ಕಾದು ನಿಂತು “ಅಲಾಹು ಅಕ್ಬರ್” (ದೇವರು ಸರ್ವಶ್ರೇಷ್ಠ ) ಎನ್ನುವುದನ್ನು ಕೇಳುತ್ತಲೇ ಓಡಿ ಬಂದು ಅಮ್ಮಾ, ಅಪ್ಪಾ, ಅದಾನ್ ಆಗುತ್ತಿದೆ, ಬೇಗ ನೀರು ಕುಡಿಯಿರಿ ಎಂದು ಉತ್ತೇಜಿಸುತ್ತಾರೆ.

೩೦ ದಿನಗಳ ಉಪವಾಸ ಮುಗಿದ ನಂತರ ಚಂದ್ರ ದರ್ಶನ ವಾಗುತ್ತಲೇ “ಈದ್” ಸಂಭ್ರಮ ಎಲ್ಲೆಡೆ. ಚಂದ್ರ ದರ್ಶನ ಆಗುತ್ತಲೇ ಮಾರನೆ ದಿನದ ಈದ್ ನಂದು ಯಾರೂ ತಿನ್ನಲು ಇಲ್ಲದೆ ಬಳಲಬಾರದು ಎಂದು ಬಡಬಗ್ಗರಿಗೆ ಅಕ್ಕಿ ದಾನ ಮಾಡುತ್ತಾರೆ. ಈ ದಾನದಿಂದಾಗಿಯೇ ಈದ್ ಹಬ್ಬಕ್ಕೆ “ಈದ್ ಅಲ್ ಫಿತ್ರ್” ಎಂದು ಹೆಸರು.         

ಸೌದಿ ಅರೇಬಿಯಾದಲ್ಲಿ ರಮದಾನ್ ತುಂಬಾ ಸೊಗಸು. ಇಡೀ ತಿಂಗಳು ಮತ್ತು ಅದರ ನಂತರ ಬರುವ ಸುಮಾರು ಹತ್ತು ದಿನಗಳ ಈದ್ ಸಂಭ್ರಮ. ಇಡೀ ನಗರವೇ ಅಲಂಕಾರದಲ್ಲಿ ಮುಳುಗಿರುತ್ತದೆ. ಎಲ್ಲೆಲ್ಲೂ ವಿಶೇಷ offer ಗಳು, ಬಹುಮಾನಗಳು, ರಸ್ತೆ ಬದಿಯಲ್ಲಿ ಉಪವಾಸವಿಟ್ಟುಕೊಂಡು ಪ್ರಯಾಣ ಮಾಡುವವರಿಗೆ ಪುಕ್ಕಟೆ ತಿಂಡಿ ತೀರ್ಥಗಳ ವಿತರಣೆ, ನಿರ್ಗತಿಕರಿಗೆ, ಕೆಳಸ್ತರದ ಉದ್ಯೋಗ ಮಾಡುವವರಿಗೆ ದಾನ ಮಾಡುವಲ್ಲಿ ಪೈಪೋಟಿ, ಹೀಗೆ ನಾನಾ ರೀತಿಯ ಚಟುವಟಿಕೆಗಳನ್ನು ಕಾಣಬಹುದು. ಕೆಲಸದ ಸಮಯವೂ ನಾಲ್ಕು ಅಥವಾ ಐದು ಘಂಟೆಗಳು. ಹಾಗಾಗಿ ಉಪವಾಸವಿರುವುದು ಬಹಳ ಸುಲಭ ಅರೇಬಿಯಾದಲ್ಲಿ.