೨೦೧೧… ಹೀಗಿತ್ತು !

ವರ್ಷಗಳು ಉರುಳುವುದೇ ಅರಿವಾಗುವುದಿಲ್ಲ. ಅಷ್ಟು ಸಲೀಸಾಗಿ ಮಾಯವಾಗಿ ಬಿಡುತ್ತವೆ.ಮತ್ತೊಂದು ವರ್ಷ ಚರಿತ್ರೆ ಸೇರಿಕೊಂಡಿತು. ಹೊಸ ವರ್ಷವನ್ನು ಸ್ವಾಗತಿಸುವ ಮತ್ತು ಸಿಗರೇಟ್ ಬಿಡುತ್ತೇನೆ, ವಾಕ್ ಮಾಡುತ್ತೇನೆ ಎನ್ನುವ ನಿರ್ಣಯಗಳ ಮಧ್ಯೆ ಸ್ವಲ್ಪ ಬಿಡುವು ಮಾಡಿಕೊಂಡು ಸಂದು ಹೋದ ವರ್ಷ ನಮಗೆ ನೀಡಿದ ಹರ್ಷ, ಭರವಸೆ ಮತ್ತು ದುಃಖ ದುಮ್ಮಾನಗಳ ಕುರಿತು ಸ್ವಲ್ಪ ಓದಿ.

ಈ ವರ್ಷ ಸರ್ವಾಧಿಕಾರದ ಉಸಿರು ಗಟ್ಟಿಸುವ ವಾತಾವರಣದಿಂದ ಕೆಲವು ದೇಶಗಳ ಜನರಿಗೆ ಮುಕ್ತಿ ಸಿಕ್ಕಿದರೆ ತಮ್ಮ ಬದುಕಿನಲ್ಲಿ ಅಮೋಘವಾದದ್ದನ್ನು ಸಾಧಿಸಿ ಸಾರ್ಥಕ ಬದುಕು ಸಾಗಿಸಿ ಕಣ್ಮರೆಯಾದ ಚೇತನಗಳು ಹಲವು.

ಉತ್ತರ ಆಫ್ರಿಕಾದ ಪುಟ್ಟ ದೇಶ ಟುನೀಸಿಯಾದಲ್ಲಿ ಅರಬ್ ಕ್ರಾಂತಿ. “ಅರಬ್ ವಸಂತ” ಎಂದು ಬಣ್ಣಿಸಲ್ಪಟ್ಟ ಈ ಕ್ರಾಂತಿ ೨೩ ವರ್ಷಗಳ ಕಾಲ ಸುದೀರ್ಘ ಆಡಳಿತ ನಡೆಸಿದ ಜೈನುಲ್ ಆಬಿದೀನ್ ರ ಕುರ್ಚಿ ಪಲ್ಲಟ ಮಾಡಿತು. ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿ ಜನಸಾಮಾನ್ಯರನ್ನು ಬಾಧಿಸಿತು. ಲಂಚಗುಳಿತನದಿಂದ ಬೇಸತ್ತ ನಿರೋದ್ಯೋಗಿ ಯುವಕ “ಮುಹಮ್ಮದ್ ಬೂ ಅಜೀಜಿ” ಆತ್ಮಹತ್ಯೆ ಮಾಡಿಕೊಂಡಾಗ ಬಂತು ಸರಕಾರಕ್ಕೆ ಸಂಚಕಾರ. ಜನ ಸಿಡಿದೆದ್ದರು, ಪ್ರದರ್ಶನಗಳು ನಡೆದವು. ಅಲ್ಲಿನ ಅಧ್ಯಕ್ಷನ ಯಾವ ಸಾಂತ್ವನದ ಮಾತುಗಳೂ ಜನರ ಆಕ್ರೋಶ ತಣಿಸಲು ವಿಫಲವಾದವು. ದಾರಿಗಾಣದೆ ಆಬಿದೀನ್ ದೇಶ ಬಿಟ್ಟು ಓಡಿದ. ಟುನೀಸಿಯಾ ಸರಕಾರ ಪತನವಾಗುತ್ತಿದಂತೆಯೇ ಈಜಿಪ್ಟ್, ಲಿಬಿಯಾ, ಸಿರಿಯಾ, ಯೆಮೆನ್, ಬಹರೇನ್, ದೇಶಗಳಿಗೂ ಕಾಲಿಟ್ಟಿತು ಅರಬ್ ವಸಂತ. ಮೂರು ದಶಕಗಳ ಕಾಲ ಈಜಿಪ್ಟ್ ದೇಶವನ್ನು ಆಳಿದ ಮುಬಾರಕ್ ಕೊನೆಗೂ ಅಧಿಕಾರ ತ್ಯಜಿಸಿದ. ರಕ್ತದ ಕೊನೇ ತೊಟ್ಟಿನ ವರೆಗೂ ಹೋರಾಡುವೆ ಎಂದ ಬಲಿಷ್ಠ ಮುಅಮ್ಮರ್  ಗದ್ದಾಫಿ ಕ್ರಾಂತಿಕಾರಿಗಳ ಕೈಗೆ ಸಿಕ್ಕಿ ಬಿದ್ದು ಹತನಾದ. ಲಿಬ್ಯಾ ವಸಂತದ ಸಂಭ್ರಮದ ಕುಣಿತ ಕಂಡಿತು. ಅರಬರಿಗೆ ಸ್ವಾತಂತ್ರ್ಯ ಎಂದರೇನು ಎಂದು ಗೊತ್ತಿಲ್ಲ ಎಂದು ಮೂಗು ಮುರಿಯುತ್ತಿದ್ದ ವಿಶ್ವ ಅರಬರ ಸ್ವಾತಂತ್ರ್ಯಕ್ಕಾಗಿನ ತುಡಿತ ನೋಡಿ ಮೂಗಿನ ಮೇಲೆ ಬೆರಳಿಟ್ಟು ಕೊಂಡಿತು.

ಅರಬ್ ದೇಶಗಳ ಈ ರಾಜಕೀಯ ವಿದ್ಯಮಾನಗಳಿಗೆ ಒತ್ತು ಕೊಟ್ಟ, ಕುಮ್ಮಕ್ಕು ನೀಡಿದ ಸಾಮಾಜಿಕ ತಾಣಗಳಾದ ಫೇಸ್ ಬುಕ್, ಟ್ವಿಟ್ಟರ್, ಯೂ ಟ್ಯೂಬ್ ಗಳು ರಾರಾಜಿಸಿದವು. ಸಾಮಾನ್ಯವಾಗಿ ತಂತ್ರಜ್ಞಾನ ಉಳ್ಳವರ ಸೊತ್ತು. ಆದರೆ ಸಾಮಾಜಿಕ ತಾಣಗಳು ಈ ಅಸಮಾನತೆಯನ್ನು ಅಮೋಘವಾಗಿ ಹೋಗಲಾಡಿಸಿದವು.  ಕಂಪ್ಯೂಟರ್ ತಂತ್ರಜ್ಞಾನ ಜನರನ್ನು ದಾಸ್ಯದ ಸಂಕೋಲೆಯಿಂದ ಹೊರಬರಲು ದೊಡ್ಡ ರೀತಿಯಲ್ಲಿ ಸಹಾಯ ಮಾಡಿತು.  

ಎರಡನೇ ವಿಶ್ವ ಯುದ್ಧದಲ್ಲಿ ಅಮೆರಿಕೆಯ ಕೆಂಗಣ್ಣಿಗೆ ಸಿಕ್ಕು ನುಚ್ಚು ನೂರಾದ ಜಪಾನ್ ಪ್ರಕೃತಿಯ ವಿಕೋಪಕ್ಕೆ ತುತ್ತಾಯಿತು ಮಾರ್ಚ್ ೨೦೧೧ ರಲ್ಲಿ. ತ್ಸುನಾಮಿ ಅಲೆಗಳು ಜಪಾನ್ ದ್ವೀಪವನ್ನು ನಿರ್ದಯವಾಗಿ ಗುಡಿಸಿ ಹಾಕಿತು. ೧೬,೦೦೦ ಕ್ಕೂ ಮಿಕ್ಕು ಜನ ಸತ್ತರು. ನಿಸರ್ಗ ತಮ್ಮ ಮೇಲೆ ಈ ರೀತಿ ಎರಗಿ ಬಂದರೂ ಧೃತಿಗೆಡದೆ, ದುರಾದೃಷ್ಟವನ್ನು ಶಪಿಸದೆ, ಜಪಾನೀಯರು ತಾಳ್ಮೆಯಿಂದ ಅಳಿದುಳಿದುದನ್ನು ಹೆಕ್ಕಿ ತಮ್ಮ ಬದುಕಿನ ಮರುನಿರ್ಮಾಣದ ಕಡೆ ಗಮನ ನೆಟ್ಟರು.   

ಮುಪ್ಪಿನೊಂದಿಗೆ ಶೃಂಗಾರ ಚಟುವಟಿಗಳು ಸಾಮಾನ್ಯವಾಗಿ ಕೊನೆಯಾಗುತ್ತವೆ ಅಥವಾ ಹಂಪ್ ಗಳನ್ನು ದಾಟುವ ವಾಹನಗಳಂತೆ ನಿಧಾನವಾಗುತ್ತವೆ. ಆದರೆ ಚಿರ ರಸಿಕ ಇಟಲಿಯ ಪ್ರಧಾನಿ ಸಿಲ್ವಿಯೋ ಬೆರ್ಲಸ್ಕೊನಿ ಯ ಹಾರ್ಮೋನುಗಳು ಯುವಜನರನ್ನು ನಾಚಿಸುತ್ತವೆ. ಉರುಳುವ ವರ್ಷಗಳು ಪಂಚಾಂಗಕ್ಕೆ ಮಾತ್ರ ಸೀಮಿತ, ತನ್ನ ಲೈಂಗಿಕ ಚಪಲಕ್ಕಲ್ಲ ಎಂದು ಹದಿ ಹರೆಯದ ಪೋರಿಯರೊಂದಿಗೆ ಸಲ್ಲಾಪ ಆಡಿ ಕಷ್ಟಕ್ಕೆ ಸಿಕ್ಕಿಕೊಂಡ ಪ್ರಧಾನಿ. ಲೈಂಗಿಕ ಹಗರಣಕ್ಕೆ ಬಲಿಯಾಗದೆ ಅಚ್ಚರಿದಾಯಕವಾಗಿ ಬದುಕುಳಿದ ಬೆರ್ಲೋ ಅಧಿಕಾರ ತ್ಯಜಿಸಿದ್ದು ಆರ್ಥಿಕ ಸಮಸ್ಯೆ ಕಾರಣ.

ಏಪ್ರಿಲ್ ತಿಂಗಳ ಮೊದಲ ದಿನ ಮೂರ್ಖರ ದಿನ. ಕೇಂದ್ರ ಸರಕಾರ ಭ್ರಷ್ಟಾಚಾರದ ಮೂಲಕ ಲಂಗು ಲಗಾಮಿಲ್ಲದೆ ದೇಶವನ್ನು ಒಂದು ಮೂರ್ಖರ ಸಂತೆ ರೀತಿ ನಡೆಸಿ ಕೊಳ್ಳಲು ತೊಡಗಿದಾಗ ಸಿಡಿದೆದ್ದರು “ಇಳಿ ಚೇತನ” ಅಣ್ಣಾ ಹಜಾರೆ. ತನ್ನ ಸ್ವ ಪ್ರಯತ್ನದಿಂದ ಮಹಾರಾಷ್ಟ್ರದ ಹಳ್ಳಿಯೊಂದನ್ನು ಅಭಿವೃದ್ಧಿ ಗೊಳಿಸಿದ ಈ ಸ್ವಾತಂತ್ರ್ಯ ಹೋರಾಟಗಾರ ದಿಲ್ಲಿಯಿಂದ ಹಿಡಿದು ಹಳ್ಳಿಯವರೆಗೂ ಆವರಿಸಿಕೊಂಡ ಲಂಚಗುಳಿತನವನ್ನು ಇಲ್ಲವಾಗಿಸಲು ಉಪವಾಸ ಸತ್ಯಾಗ್ರಹ ಶುರು ಮಾಡಿದರು. ಐದು ಸಾವಿರ ಮೈಲು ದೂರದಿಂದ ವ್ಯಾಪಾರಕ್ಕೆ ಎಂದು ಬಂದು ನಮ್ಮನ್ನು ಒದ್ದು, ದಬ್ಬಾಳಿಕೆಯಿಂದ ಆಡಳಿತ ನಡೆಸಿದ ಪರದೇಸೀ ಬ್ರಿಟಿಷರೂ ಉಪವಾಸ ಸತ್ಯಾಗ್ರಹಕ್ಕೆ ಮಣಿದರು. ಆದರೆ ನಮ್ಮ ದೇಸೀ ನಾಯಕರು ಜಪ್ಪಯ್ಯ ಎನ್ನಲಿಲ್ಲ. ಬ್ರಿಟಿಷರಿಗಿದ್ದ ನಾಚಿಕೆ, ಔದಾರ್ಯ ಇವ್ಯಾವುವೂ ನಮ್ಮ ನಾಯಕರಲ್ಲಿ ಕಾಣದಾಯಿತು. ಅಣ್ಣಾರವರ ಆಂದೋಲನವನ್ನು  ಮೊದ ಮೊದಲು ಅವಗಣನೆ ಮಾಡಿ ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು ಎಂದು ಭಯ ಬಿದ್ದು ಲೋಕಪಾಲ್ ಮಸೂದೆಗೆ ಒಪ್ಪುವ ನಾಟಕ ಆಡಿ ಅಣ್ಣಾ ರಿಗೆ ಸೊಗಸಾಗಿ ನಾಮ ಬಳಿದರು. ಅದೂ ಸಾಲದು ಎಂಬಂತೆ ಅಣ್ಣಾ ಜೊತೆ ವೇದಿಕೆಯಲ್ಲಿರುವವರ ಪೂರ್ವಾಪರ ಚರಿತ್ರೆ ತೆಗೆದು ಅಣ್ಣಾ ದೇಶ ಎಣಿಸಿದ ಮುಗ್ಧ ಅಣ್ಣಾ ಅಲ್ಲ, ಆರೆಸ್ಸೆಸ್ ಏಜೆಂಟ್ ಎಂದು ಪ್ರಚಾರ ಮಾಡಿ ಲಂಚದ ವಿರುದ್ಧದ ಅಂದೋಲನದ ದಿಕ್ಕನ್ನೇ ದಿಕ್ಕಾ ಪಾಲು ಮಾಡಿತು ಕೇಂದ್ರ ಸರಕಾರ. ತುನೀಸಿಯಾದ ಬೂ ಅಜೀಜಿ ಯ ಆತ್ಮ ಹತ್ಯೆ ಮತ್ತು ಜನರ ಪ್ರತಿಭಟನೆಗೆ ಅಲ್ಲಿನ ಅಧ್ಯಕ್ಷ ಲಂಚಗುಳಿಯಾದರೂ, ಮರ್ಯಾದಸ್ಥನಂತೆ ತಲೆ ಬಾಗಿ ಹೊರನಡೆದ.  ನಮ್ಮಲ್ಲಿ ಹಾಗಾಗಲಿಲ್ಲ. ನಮ್ಮ ಕೇಂದ್ರ ಸರಕಾರಕ್ಕೆ ತಲೆ ಇದ್ದರಲ್ಲವೇ ಬಾಗುವ ಪ್ರಶ್ನೆ ಏಳೋದು.          

ನಾರ್ವೆ ದೇಶದಲ್ಲಿ ನರಸಂಹಾರ: ನೈಸರ್ಗಿಕ ಸಂಪನ್ಮೂಲಗಳಿಂದ ಶ್ರೀಮಂತವಾದ ಅಇರೋಪ್ಯ ಖಂಡದ “ನಾರ್ವೆ” ಪುಟ್ಟ ದೇಶ. ಇಲ್ಲಿನ ಸಾಲ್ಮನ್ ಜಾತಿಯ ಮೀನು ಜಗತ್ಪ್ರಸಿದ್ಧ. ಸಾಲ್ಮನ್ ಮೀನು ಹೃದಯಕ್ಕೆ ತುಂಬಾ ಒಳ್ಳೆಯದಂತೆ. land of midnight sun ಎಂದೂ ಅರಿಯಲ್ಪಡುವ ಈ ದೇಶದಲ್ಲಿ ವರ್ಷದ ಕೆಲವೊಂದು ತಿಂಗಳು ಸೂರ್ಯ ಮಧ್ಯ ರಾತ್ರಿ ಉದಯಿಸುತ್ತಾನೆ. ೩೨ ವರ್ಷ ಪ್ರಾಯದ ಸುಂದರ ಯುವಕ ‘ಆಂಡರ್ಸ್ ಬೆಹ್ರಿಂಗ್ ಬ್ರೆವಿಕ್’ ಪ್ರಶಾಂತ ನಾರ್ವೆ ದೇಶವನ್ನು ಶೋಕ ಸಾಗರದಲ್ಲಿ ಮುಳುಗಿಸಿದ ತನ್ನ ನಿರ್ದಯೀ ಹಿಂಸೆಯ ಮೂಲಕ. ರಾಜಧಾನಿ ಓಸ್ಲೋ ನಗರದಲ್ಲಿ ಬಾಂಬಿಟ್ಟು ನಗರದ ಸಮೀಪದಲ್ಲೇ ಇದ್ದ ದ್ವೀಪಕ್ಕೆ ಹೋಗಿ ಅಲ್ಲಿ ನೆರೆದಿದ್ದ ನೂರಾರು ಜನರ ಮೇಲೆ ಎರ್ರಾಬಿರ್ರಿ ಗುಂಡು ಹಾರಿಸಿ ೮೦ ಕ್ಕೂ ಹೆಚ್ಚು ಜನರನ್ನು ಕೊಂದ. ಕ್ರೈಸ್ತ ಮೂಲಭೂತವಾದಿಯಾಗಿದ್ದ ಈತನ ಕ್ರೌರ್ಯಕ್ಕೆ ವಿಶ್ವ ಬೆಚ್ಚಿತು, ರಾತ್ರಿ ಉದಯಿಸುತ್ತಿದ್ದ ಸೂರ್ಯ ಹಾಡು ಹಗಲೇ ಅಸ್ತಮಿಸಿದ ಇವನ ಕ್ರೌರ್ಯಕ್ಕೆ ಬೆಚ್ಚಿ.  

ಯಾವುದೇ ಕಾರಣವಿಲ್ಲದೆ ಇರಾಕಿನ ಮೇಲೆ ಧಾಳಿ ಮಾಡಿ, ಆ ದೇಶವನ್ನು ಆಕ್ರಮಿಸಿಕೊಂಡು ಎರಡು ದಶಲಕ್ಷಕ್ಕೂ ಜನರನ್ನು ಕೊಂದ ಅಮೇರಿಕಾ ತನ್ನ ಸೈನ್ಯ ಹಿಂದಕ್ಕೆ ಕರೆಸಿಕೊಳ್ಳಲು ಕೊನೆಗೂ ತೀರ್ಮಾನಿಸಿತು. ಇರಾಕಿನ ಮೇಲಿನ ಯುದ್ಧ ಯಾವ ರೀತಿ ಅಮೇರಿಕಾ, ಇಂಗ್ಲೆಂಡ್ ನಂಥ ಬಲಿಷ್ಠ ದೇಶಗಳು ಜನರ ಕಣ್ಣಿಗೆ ಬೂದಿ ಎರಚಿ ತಮ್ಮ ಸ್ವಾರ್ಥ ಸಾಧಿಸಲು ತಯಾರು ಎನ್ನುವುದಕ್ಕೆ ಇರಾಕ್ ಜ್ವಲಂತ ನಿದರ್ಶನವಾಯಿತು.

ಆಫ್ರಿಕಾ ಖಂಡದ ಸುಡಾನ್ ದೇಶದಿಂದ ದಕ್ಷಿಣ ಸುಡಾನ್ ಎನ್ನುವ ದೇಶ ಪ್ರತ್ಯೇಕಗೊಂಡು ಸ್ವಾತಂತ್ರ್ಯವಾಯಿತು. 

೨೦೧೧ ರ ನೊಬೆಲ್ ಶಾಂತಿ ಪುರಸ್ಕಾರ ಈ ಸಲ ಮೂರು ಮಹಿಳೆಯರು ಹಂಚಿಕೊಂಡರು. ಸ್ವಾತಂತ್ರ್ಯ, ಸೌಹಾರ್ದ, ಮತ್ತು ಲಿಂಗ ಬೇಧ ನಿವಾರಣೆಗೆ ಶ್ರಮಿಸಿದ ಈ ಮಹಿಳೆಯರಲ್ಲಿ ಇಬ್ಬರು ಆಫ್ರಿಕಾ ಖಂಡದ ಲೈಬೀರಿಯ ದೇಶದವರು, ಮತ್ತೊಬ್ಬರು ಅರಬ್ ಪ್ರಾಂತ್ಯದ ಯೆಮೆನ್ ದೇಶದವರು. ಸಾಂಪ್ರದಾಯಿಕ ಅರಬ್ ಮುಸ್ಲಿಂ  ಸಮಾಜದಿಂದ ಬಂದ “ತವಕ್ಕುಲ್ ಕರ್ಮಾನ್” ಯಾವ ತೊಡಕುಗಳಿಗೂ ಅಂಜದೆ ತನ್ನ ದೇಶದ ಸರ್ವಾಧಿಕಾರಿಯನ್ನು ಧೈರ್ಯವಾಗಿ ಎದುರಿಸಿ ಯಶಸ್ವಿಯಾದರು. ಮಹಿಳೆ ಧೈರ್ಯವಾಗಿ ಮುನ್ನುಗ್ಗಿದರೆ ಯಾವ ಮೂಲಭೂತವಾದಿಗಳಾಗಲೀ, ಸಮಾಜದ ಯಾವ ನಿರ್ಬಂಧಗಳೇ ಆಗಲಿ ಲೆಕ್ಕಕ್ಕೆ ಬರದು ಎಂದು ವಿಶ್ವಕ್ಕೆ ಸಾರಿದ ೩೨ ರ ಹರೆಯದ ತವಕ್ಕುಲ್ ನೊಬೆಲ್ ಪ್ರಶಸ್ತಿ ಪಡೆದ ಎರಡನೇ ಮುಸ್ಲಿಂ ಮಹಿಳೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಇರಾನಿನ ಶಿರೀನ ಇಬಾದಿ ನೊಬೆಲ್ (೨೦೦೩) ವಿಜೇತ ಮತ್ತೊಬ್ಬ ಮಹಿಳೆ.   

ಈ ಸಲದ ಪುರಸ್ಕಾರ ಅರಬ್ ವಿಶ್ವದಲ್ಲಿ ಸ್ವಾತಂತ್ರ್ಯದ ಕಹಳೆ ಮೊಳಗಿಸಿದ ಬ್ಲಾಗಿಗಳಿಗೆ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಸ್ವಾತಂತ್ರ್ಯದೊಂದಿಗೆ ಸಮಾನತೆಯ ಕಹಳೆ ಮೊಳಗಿಸಿದ ಧೀರ ಮಹಿಳೆಯರ ಪಾಲಾಯಿತು ನೊಬೆಲ್.  

ಕಾಲನ ಕರೆಗೆ ವಿಧೇಯರಾಗಿ ಓಗೊಟ್ಟು ಕಣ್ಮರೆಯಾದವರು

ವಿವಾದಾಸ್ಪದ ಕಲಾವಿದ ಮಕ್ಬೂಲ್ ಫಿದಾ ಹುಸೇನ್ ನಿಧನ. ಹುಸೇನರ ಕುಂಚಗಳು ತನ್ನ canvas ಗಡಿ ಮೀರಿ ಜನರ ನಂಬಿಕೆಗಳ ಮೇಲೆ ಹರಿದಾಡ ತೊಡಗಿಡಾಗ ಗಡೀ ಪಾರಾಗಬೇಕಾಯಿತು. ಕತಾರ್ ದೇಶದ ಪೌರತ್ವ ಪಡೆದರೂ ಮಾತೃ ಭೂಮಿಗಾಗಿ ಮಿಡಿಯಿತು ಹುಸೇನ್ ಮನ. ಹುಸೇನ್ ಅಂತ್ಯ ಲಂಡನ್ನಿನಲ್ಲಿ. ಹುಸೇನ್ ಮರಣಕ್ಕೆ ಪ್ರಧಾನಿ, ರಾಷ್ಟ್ರಪತಿ ಶೋಕ. ಹುಸೇನ್ ಸಾವು ರಾಷ್ಟ್ರೀಯ ನಷ್ಟ ಎಂದು ಪ್ರಧಾನಿ ಹೇಳಿದರೆ, ರಾಷ್ಟ್ರಪತಿ ಗಳು ಹೇಳಿದ್ದು ಹುಸೇನ್ ಇಲ್ಲದ ಕಲೆ ಶೂನ್ಯ ಎಂದು.

ವಿಶ್ವದ ಕುಖ್ಯಾತ ಭಯೋತ್ಪಾದಕ ಬಿನ್ ಲಾದೆನ್. ಅಮೆರಿಕೆಯ to do list ನಲ್ಲಿ ಆಗ್ರ ಪಂಕ್ತಿಯಲ್ಲಿದ್ದ ಲಾದೆನ್ ನ ಅವಸಾನ ಕೊನೆಗೂ ಕೈಗೂಡಿತು. ಪಾಕ್ ರಾಜಧಾನಿಯ ಸಮೀಪದ ಅಬೋಟ್ಟಾ ಬಾದ್ ನಲ್ಲಿ ಅಡಗಿ ಕೂತಿದ್ದ ಬಿನ್ ಲಾದೆನ್ ನನ್ನು ಅಮೆರಿಕೆಯ ಅತಿ ಪ್ರತಿಷ್ಠಿತ ಕಮಾಂಡೋ ಪಡೆ “ಸೀಲ್” ಬೇಟೆಯಾಡಿ ಅಮೇರಿಕಾ ನಿರಾಳ ಭಾವ ಅನುಭವಿಸುವಂತೆ ಮಾಡಿತು. ಬಿನ್ ಲಾದೆನ್ ಸಾವಿನ ಸುದ್ದಿ ವಿಶ್ವ ಪುರಾವೆ ಬಯಸಿದಾಗ ಅಮೇರಿಕಾ ಹೇಳಿದ್ದು, ಪ್ರದರ್ಶಿಸಲು ಪಾರಿತೋಷಕ ಅಲ್ಲ ನಮಗೆ ಸಿಕ್ಕಿದ್ದು, ನಾವು ಹೇಳಿದ್ದನ್ನು ನಂಬಿ ಎಂದು. ಸಾವಿರಾರು ಜನರ ಭವಿಷ್ಯವನ್ನು ಭೂ ಸಮಾಧಿ ಮಾಡಿದ್ದ ಬಿನ್ ಲಾದೆನ್ ಗೆ ಸತ್ತಾಗ ಸಿಕ್ಕಿದ್ದು ಜಲಸಮಾಧಿ.  

ಕಂಪ್ಯೂಟರ್ ಎಂದರೆ ಆಕರ್ಷಣೆ ಇಲ್ಲದ ಒಂದು bland ಉಪಕರಣ ಅಲ್ಲ, ಅದು ಒಂದು ಮೋಜನ್ನು, ನೀಡುವ ಆಕರ್ಷಕ ಉಪಕರಣ ಎಂದು ಜಗತ್ತಿಗೆ ತೋರಿಸಿದ “ಆಪಲ್” ನ ಒಡೆಯ ಸ್ಟೀವ್ ಜಾಬ್ಸ್  ಯಕೃತ್ತಿನ ಕ್ಯಾನ್ಸರ್ ಗೆ ಬಲಿಯಾದ. ತಂತ್ರಜ್ಞಾನ ಬಡವಾಯಿತು ಎಂದು ಶೋಕಿಸಿದರು ಟೆಕ್ಕಿಗಳು.

ಭಾರತೀಯ ಕ್ರಿಕೆಟ್ ನ ಗತಕಾಲದ ಹೀರೋ ಮನ್ಸೂರ್ ಅಲಿ ಖಾನ್ ಪಟೌಡಿ ನಿಧನದಿಂದ ಕ್ರಿಕೆಟ್ ಆಟ ತನ್ನ ಹೊಳಪನ್ನು ಕಳೆದು ಕೊಂಡಿತು. ಟೈಗರ್ ಎಂದು ಕರೆಯಲ್ಪಡುತ್ತಿದ್ದ ಈ ಸ್ಫುರದ್ರೂಪಿ “ಪಟೌಡಿ” ಪ್ರಾಂತ್ಯದ “ನವಾಬ್’ ಭಾರತದ ಯಶಸ್ವೀ ನಾಯಕರಲ್ಲೊಬ್ಬರು. ಅಂದಿನ ಪ್ರಸಿದ್ಧ ನಟಿ ಶರ್ಮಿಳಾ ಟಾಗೋರ್ ರನ್ನು ವರಿಸಿದ ಪಟೌಡಿ ಕ್ರಿಕೆಟ್ ಆಟಕ್ಕೆ ಗ್ಲಾಮರ್ ತಂದು ಕೊಟ್ಟವರು. ಪಟೌಡಿ ನಿಧನರಾದಾಗ ವಯಸ್ಸು ೭೦.

ಭೀಂ ಸೇನ್ ಜೋಶಿ, ಭಜನ್ ಲಾಲ್, ಭೂಪೇನ್ ಹಜಾರಿಕಾ, ಅಂಬಿಕಾ ಚೌಧುರಿ, ಚಿತ್ರನಟ ದೇವ್ ಆನಂದ್, ಶಮ್ಮಿ ಕಪೂರ್, ಸತ್ಯಸಾಯಿ ಬಾಬ, ಅರ್ಜುನ್ ಸಿಂಗ್ ಇತರೆ ಗಣ್ಯರು ಅಗಲಿದವರು.  

ನಮ್ಮ ರಾಜ್ಯದ ವರ್ಣರಂಜಿತ ವ್ಯಕ್ತಿತ್ವ ಕಣ್ಮರೆ. ಎಸ್, ಬಂಗಾರಪ್ಪ ಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಸಂಸದರಾಗಿ ರಾಜಕೀಯ ಕ್ಷೇತ್ರದಲ್ಲಿ ದುಡಿದವರು. ಒಂದು ಕಾಲದಲ್ಲಿ ನಾನು ಅವರ ಅಭಿಮಾನಿ. ಪಕ್ಷದಿಂದ ಪಕ್ಷಕ್ಕೆ ಜಿಗಿದು ಅಭಿಮಾನಿಗಳಿಗೆ ಇರುಸು ಮುರುಸು ಕಸಿವಿಸಿ ತರುತ್ತಿದ್ದ ಬಂಗಾರಪ್ಪ ಟೆನ್ನಿಸ್ ಮತ್ತು ಯೋಗ ಪ್ರೇಮಿ. ತಂದೆಯ ಹೆಸರು ಎಷ್ಟಿ ಆಕರ್ಷಕ, ಜನಪ್ರಿಯ  ಎಂದರೆ ಅವರ ಮಗನಿಗೆ ಸ್ವಂತದ ಹೆಸರಿನ ಅವಶ್ಯಕತೆಯೇ ಬರಲಿಲ್ಲ. ಕುಮಾರ್ ಬಂಗಾರಪ್ಪ ಎಂದು ಪ್ರಸಿದ್ಧನಾದ. 

ಸಮಸ್ತ ಕನ್ನಡಿಗರಿಗೂ, ಭಾರತೀಯರಿಗೂ ಬರಲಿರುವ ಹೊಸ ವರುಷ ಉಲ್ಲಾಸ, ಹರ್ಷ, ಯಶಸ್ಸನ್ನು ತರಲಿ ಎಂದು ಹಾರೈಸುತ್ತಾ…….

ನಿಮ್ಮ ಅಬ್ದುಲ್

ಅಂಬಾನಿ ಸಂಪತ್ತಿಗೆ ಟಾ ಟಾ ಸವಾಲ್

ಉಪ್ಪಿನಿಂದ ಹಿಡಿದು ಬೆಲೆಬಾಳುವ ಜಾಗ್ವಾರ್ ಕಾರುಗಳ ತನಕ ಉತ್ಪಾದಿಸುವ ಬೃಹತ್ ಕೈಗಾರಿಕೋದ್ಯಮಿ ರತನ್ ಲಾಲ್ ಟಾ ಟಾ (ಕೆಲವರು ತಾ ತಾ ಎಂತಲೂ ಬರೆಯುತ್ತಾರೆ) ಇಂಗ್ಲೆಂಡಿನ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಿಲಯನ್ಸ್ ಕೈಗಾರಿಕಾ ಸಮುಚ್ಚಯಗಳ ಮಾಲೀಕ ಮುಕೇಶ್ ಅಂಬಾನಿಯ ಶ್ರೀಮಂತಿಕೆ ಬಗ್ಗೆ ಮಾತನಾಡಿ ವಿವಾದಕ್ಕೆ ಒಳಗಾಗಿದ್ದಾರೆ.

ವಿಶ್ವ ನಿಬ್ಬೆರಗಾದ, ಶ್ರೀಮಂತಿಕೆಯ ನಗ್ನ ಪ್ರದರ್ಶನ ನೀಡಿದ ಅಂಬಾನಿ ವಾಸದ ಮನೆ ಭಾರತದಂಥ ಬಡ ದೇಶದಲ್ಲಿ ಭಾರತೀಯನೊಬ್ಬನಿಂದ ಬೇಕಿತ್ತೆ ಎಂದು ಸಾಮಾನ್ಯ ಜನ ಕೇಳಿದರೆ ವಕ್ರ ನೋಟ ಎದುರಿಸಬೇಕಾಗುತ್ತದೆ ಆದರೆ ಅದೇ ಮತೊಬ್ಬ ಆಗರ್ಭ ಶ್ರೀಮಂತ ಟಾ ಟಾ ಹೇಳಿದಾಗ  ಆ ಮಾತಿಗೆ ತೂಕ ಸೇರಿ ದೊಡ್ಡ ಸುದ್ದಿಯಾಯಿತು.

ಅಂಬಾನಿ ಕಟ್ಟಿದ ೧೦ ಸಾವಿರ ಕೋಟಿ ರೂಪಾಯಿಗೂ ಹೆಚ್ಚಿನ, ೩೯೮,೦೦೦ ಸಾವಿರ ಚದರಡಿಯ, ಏಳು ವರ್ಷಗಳ ಕಾಲ ಸಮಯ ತೆಗೆದು ಕೊಂಡ, ೧೬೦ ಕಾರುಗಳನ್ನು, ಮೂರು ಹೆಲಿಕಾಪ್ಟರ್ ಗಳನ್ನು ಪಾರ್ಕ್ ಮಾಡಬಹುದಾದ  ೨೭ ಮಹಡಿಯ ಕಟ್ಟಡ ದ ಉದ್ಘಾಟನೆ ಗೇ  ವಿಶ್ವದ ವಿವಿಧ  ಕಡೆಗಳಿಂದ ಬರುವ ಅತಿಥಿಗಳು ಮೈಲುಗಟ್ಟಲೆ ಉದ್ದ ಚಾಚಿ ಕೊಂಡ ಕೊಳೆಗೇರಿಗಳನ್ನು ದಾಟಿ ಕೊಂಡು ಬರಬೇಕಂತೆ. ಭಾರತದ ಸುಮಾರು ಎಂಭತ್ತು ಕೋಟಿ ಗೂ ಅಧಿಕ ಜನ ದಿನಕ್ಕೆ ನೂರು ರೂಪಾಯಿಗಿಂತ ಕಡಿಮೆ ಸಂಪಾದನೆ ಮಾಡುವಾಗ ಈ ಆಗರ್ಭ ಶ್ರೀಮಂತ ಇಂಥ ದುಂದು ವೆಚ್ಚ ಮಾಡೋ ಅವಶ್ಯಕತೆ ಇತ್ತೇ ಎಂದು ಪ್ರಶ್ನಿಸುವವರೂ ಇದ್ದಾರೆ.

ಶ್ರೀಮಂತಿಕೆಯ ಮೇಲಿನ ಉದಾಹರಣೆ ದೇಶೀಯ ದಾದರೆ ಕೆಳಗಿದೆ ನೋಡಿ ವಿದೇಶೀ ಶ್ರೀಮಂತನ ಕಥೆ.

ಅಮೆರಿಕೆಯ ಆಗರ್ಭ ಶ್ರೀಮಂತ ನಿಕೊಲಸ್ ಬರ್ಗ್ರೆವಿನ್ ಎಲ್ಲ ಧನವಂತರ ಹಾಗೆ ಧನಪಿಶಾಚಿ ಅಲ್ಲ. ಈತ ಒಬ್ಬ ಮಹಾ ಸಾತ್ವಿಕ.  ತನ್ನ ಧನದ ಮದದಿಂದ ಓಲಾಡದೇ ಬಡವರಿಗೆ ದಾನ ಮಾಡುವ, ಕಾಳಜಿ ಇರುವ ಶ್ರೀಮಂತ.

ಕಾಂಬೋಡಿಯದಲ್ಲಿ ಕೃಷಿಕರಿಗೆ ಸಹಾಯ ಮತ್ತು ಬಡ ರಾಷ್ಟ್ರಗಳಲ್ಲಿ ಗಗನಚುಂಬಿ ಕಟ್ಟಡಗಳ ನಿರ್ಮಾಣ ಹೀಗೆ ಹತ್ತು ಹಲವು ದಾರಿದ್ರ್ಯ ನಿವಾರಣಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ನಿಕೊಲಸ್ ಇತರ ಧನವಂತರಿಗೆ ಮಾದರಿಯಾಗಿದ್ದಾರೆ.

ಷೇರುಮಾರುಕಟ್ಟೆಯಲ್ಲಿ ಅಗಾಧವಾಗಿ ಸಂಪಾದಿಸಿದ ನಿಕೊಲಸ್ ಹಣದೊಂದಿಗೆ ಬರುವ ಎಲ್ಲಾ ಸೌಕರ್ಯಗಳನ್ನೂ ಪಡೆದರು. ಫ್ಲೋರಿಡಾದ ಖಾಸಗಿ ದ್ವೀಪವೊಂದರಲ್ಲಿ ಬಂಗಲೆ, ನ್ಯೂಯಾರ್ಕಿನಲ್ಲಿ ಅತಿ ದುಬಾರಿ ಮನೆ, ಇವೆಲ್ಲವನ್ನೂ ಮಾರಿ ಹೋಟೆಲ್ನಲ್ಲಿ ಬಾಡಿಗೆಗಿದ್ದು,  ತಮ್ಮ ಸಂಪತ್ತನ್ನು ಬಡವರ ಏಳಿಗೆಗಾಗಿ ಇಟ್ಟಿದ್ದಾರೆ ನಿಕೊಲಸ್.

“ಥಳಕು ಬೆಳಕಿನ ಜೀವನ ಮತ್ತು ಜನರಿಗೆ ಪ್ರದರ್ಶಿಸುವ ತೋರಿಕೆಯ ಬದುಕು ಶೂನ್ಯ, ನನ್ನ ಹತ್ತಿರ ಇರುವುದೆಲ್ಲವೂ ಕ್ಷಣಿಕ, ನಾವೀ ಜಗತ್ತಿನಲ್ಲಿರುವುದು ಅಲ್ಪ ಸಮಯ ಮಾತ್ರ. ಶಾಶ್ವತವಾಗಿ ನಿಲ್ಲುವ ನಮ್ಮ ನಡವಳಿಕೆಗಳೇ ನಿಜವಾದ ಮೌಲ್ಯ” ಇವು ನಿಕೊಲಸ್ ಅವರ ನುಡಿಮುತ್ತುಗಳು.

ಪ್ರಚಾರಗಳಿಂದ ಯಾವಾಗಲೂ ದೂರವಿರುವ ಈ ಯುವ ಶ್ರೀಮಂತ ಅನೇಕರಿಗೆ ದೊಡ್ಡ ಒಗಟು. ಕೆಲ ವರ್ಷಗಳ ಹಿಂದೆ ಡಚ್ ಪತ್ರಿಕೆಯೊಂದು ಅವರ ಬಗ್ಗೆ  ಬರೆದಾಗ ಪತ್ರಿಕೆಯ ಎಲ್ಲ ಪ್ರತಿಗಳನು ಖರೀದಿಸಿ ಬಿಸಾಕಿದರು.

ನಮ್ಮಲ್ಲಿನ ಶ್ರೀಮಂತರಾದ ಅಂಬಾನಿಯಂಥವರು, ಮೈಮಾಟ ಪ್ರದರ್ಶಿಸಿ ಹಣಗಳಿಸುವ ಬಾಲಿವುಡ್ನ ನರ್ತಕ ನರ್ತಕಿಯರು ಮತ್ತು ಇತರೆ ಹತ್ತು ಹಲವು ಕೃತ್ರಿಮ ಗಳ ಮೂಲಕ ಸಂಪಾದಿಸಿದ ಹಣವಂತರು ನಿಕೊಲಸ್ ಬರ್ಗ್ರೆವಿನ್ ಅವರಿಂದ ಕಲಿಯಲು ಬಹಳಷ್ಟಿದೆ.

ಈಗಿನ ಕಾಲದ ಹಣವಂತರ ಅಹಂಕಾರ, ಧಿಮಾಕನ್ನು ಕಂಡ ನಮಗೆ ನಿಕೊಲಸ್ ಒಂದು ಕಾರಂಜಿ ಇದ್ದಂತೆ. ಒಂದು ಆಹ್ಲಾದಕರ ತಂಗಾಳಿ.

ತೇರೆ ಬಿನ್ ಲಾದೆನ್…

ಲಾದೆನ್, ನೀನಿಲ್ಲದೆ… ಸಿನೆಮಾ ದೊಡ್ಡ ಸುದ್ದಿ ಮಾಡಿತು ನಮ್ಮ ದೇಶದಲ್ಲಿ. ಲಾದೆನ್ ಬಗೆಗೆ ಅಮೆರಿಕೆಯ ಅತಿ ಆಸಕ್ತಿಯ ಕುರಿತು ರಚಿಸಿದ ಈ ಚಿತ್ರ ವೀಕ್ಷಕರನ್ನು ರಂಜಿಸಿತು. ಲಾದೆನ್ ನ         enigma ರಾಜಕಾರಣಿ, ಸುದ್ದಿ ಪಂಡಿತರನ್ನು ಮಾತ್ರವಲ್ಲ ಚಿತ್ರರಂಗವನ್ನೂ ಬಾಧಿಸಿತು. ಹತ್ತು ಹಲವು ವರ್ಷಗಳಿಂದ ಒಂದೇ ಸಮನೆ ಅಮೇರಿಕಾ ಲಾದೆನ್ ಗಾಗಿ ಪ್ರಪಂಚ ಜಾಲಾಡಿದರೂ ಸಿಗದೇ ಹತಾಶವಾಗಿದ್ದಾಗ ಇದ್ದಕ್ಕಿದ್ದಂತೆ, ಯಾವ ಸುಳಿವೂ, ಮುನ್ಸೂಚನೆಯೂ ಇಲ್ಲದೆ justice is done, Laden is gone ಎಂದು ಬೆಳ್ಳಂ ಬೆಳಗ್ಗೆ  ಕೇಳಿ ತಬ್ಬಿಬ್ಬಾದ ನಮಗೆ ಲಾದೆನ್ ಸಾವು ಸಿನಿಮೀಯ ರೀತಿ ಎಂದು ಅನ್ನಿಸಿದರೆ ತಪ್ಪಾಗಲಾರದು. ಹತ್ತು ವರ್ಷಗಳಿಂದ ಅತ್ಯಾಧುನಿಕ ಉಪಗ್ರಹಗಳಿಂದ ಹಿಡಿದು ಅಮೇರಿಕನ್ ಸೈನಿಕರ high tech binocular ಗಳಿಗೂ ಸಿಗದೇ ತಪ್ಪಿಸಿಕೊಳ್ಳುತ್ತಿದ್ದ ಬಿನ್ ಲಾದೆನ್ ದಿಢೀರನೆ ಕೊಲ್ಲಲ್ಪಟ್ಟ ಎಂದರೆ ಒಂದು ರೀತಿಯ ಸಿನಿಮೀಯ ತಾನೇ?  

ಲಾದೆನ್ ಬರೀ ಅಮೆರಿಕೆಗೆ ಮಾತ್ರವಲ್ಲ, ನಮ್ಮ ದೇಶದಲ್ಲೂ ಕುತೂಹಲ, ಭಯ, ಆಕ್ರೋಶ ಬರಿಸಿದ ಹೆಸರು. ಅಮೆರಿಕೆಯ ಮೇಲೆ ಮತ್ತು ವಿಶ್ವದ ಇತರೆ ನಗರಗಳಲ್ಲಿ ತನ್ನ ಸಾವಿನ ಏಜೆಂಟರನ್ನು ಹರಿಬಿಟ್ಟ ಲಾದೆನ್ ಕೊನೆಗೂ ಸೆಣೆಸುತ್ತಾ  ಉರುಳಿ ಬಿದ್ದ ಅಮೆರಿಕೆಯ ನಾವಿಕ ದಳದ ಯೋಧರ ಗುಂಡುಗಳಿಗೆ,  ಪಾಕಿಸ್ತಾನದ “ಅಬೋಟ್ಟಾಬಾದ್” ನಗರದಲ್ಲಿ.

ಅಬೋಟ್ಟಾಬಾದ್, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಿಂದ ಕೇವಲ ೩೫ ಮೈಲು ದೂರ ಇರುವ, ಪ್ರತಿಷ್ಠಿತ ಸೈನಿಕ ತರಬೇತಿ ಕಾಲೇಜು ಹೊಂದಿದ ಈ ನಗರದಲ್ಲಿ ಬಿನ್ ಲಾದೆನ್ ಸುಮಾರು ಐದು ವರ್ಷಗಳಿಗೂ ಹೆಚ್ಚು ಕಾಲ ಅವಿತು ಕೊಂಡಿದ್ದ ಎಂದರೆ ಯಾರೂ ದಂಗಾಗುವರು. ಅಮೆರಿಕೆಯಂತೂ ಮೂರ್ಛೆ ಬೀಳುವುದೊಂದು ಬಾಕಿ. ಭಯೋತ್ಪಾದನೆ ತಡೆಯಲು, ಲಾದೆನ್ ಕ್ರುತ್ಯಗಳನ್ನು ತಡೆಯಲು ಪಾಕಿಸ್ತಾನದ ಬೆಂಬಲ ಪಡೆದಿದ್ದ ಅಮೇರಿಕಾ ಈ ಸಹಾಯಕ್ಕೆ ಕೊಡುತ್ತಿದ್ದ ಫೀಸು ವರ್ಷಕ್ಕೆ ೩ ಬಿಲ್ಲಿಯನ್ ಡಾಲರ್. ಯಾಚಕ ದೇಶ. ಇಂಥದ್ದೇ ಮತ್ತೊಂದು ಯಾಚಕ ದೇಶ ಇಸ್ರೇಲ್. ಬಿನ್ ಲಾದೆನ್ ನನ್ನು ಹುಡುಕುತ್ತಿದ್ದೇವೆ, ತಾಲಿಬಾನಿ ಗಳನ್ನು ಸದೆ ಬಡಿಯುತ್ತಿದ್ದೇವೆ ಎಂದು ಸುಳ್ಳು ಸುಳ್ಳೇ ಭರವಸೆ ನೀಡುತ್ತಾ ಅಮೆರಿಕೆಯ ಡಾಲರುಗಳ ಲಂಚವನ್ನು ಲಜ್ಜೆಯಿಲ್ಲದೆ ಸ್ವೀಕರಿಸಿದ ಪಾಕ್ ಅಮೆರಿಕೆಗೆ ಮೋಸ ಮಾಡಿತೆಂದೇ ವಿಶ್ವದ, ಅಮೆರಿಕನ್ನರ ನಂಬಿಕೆ. ಈ ರೀತಿ ಪುಕ್ಕಟೆ ಯಾಗಿ ಸಿಗುತ್ತಿದ್ದ ಸಂಪತ್ತನ್ನು ನುಂಗುತ್ತಿದ್ದ ಪಾಕಿಗೆ ಲಾದೆನ್ ಚಿನ್ನದ ತತ್ತಿ ಇಡುವ ಕೋಳಿ. main source of income. ಪಾಪ, ಲಾದೆನ್ ಸಾವಿನಿಂದ ದೊಡ್ಡ, ಭರಿಸಲಾರದ ನಷ್ಟ ಪಾಕಿಗೆ.  

ಪಾಕಿಸ್ತಾನ ಮಾತ್ರ ತನಗೆ ಲಾದೆನ್ ನ ಇರುವಿನ ಬಗ್ಗೆ ಗೊತ್ತೇ ಇಲ್ಲ ಎಂದು ಆಣೆ ಹಾಕಿ ಹೇಳಿದರೂ circumstantial evidence ಇದಕ್ಕೆ ವ್ಯತಿರಿಕ್ತ. ಈ ವಿವಾದದಲ್ಲಿ ಮತ್ತೊಂದು ಸಮಸ್ಯೆ ಇದೆ. ಅಮೇರಿಕಾ ಮತ್ತು ಪಾಕಿಸ್ತಾನ chronic liars. ಶುದ್ಧ ಸುಳ್ಳರು. ಈ ಇಬ್ಬರ ತಗಾದೆ ಬಗೆಹರಿಸಲು ಇಲ್ಲಿದೆ ಲಿಟ್ಮಸ್ ಟೆಸ್ಟ್. ಲಾದೆನ್ ಎಲ್ಲಿದ್ದಾನೆ ಎನ್ನುವುದು ಪಾಕಿಗೆ ತಿಳಿದಿತ್ತೆ? ಪಾಕಿನ ಸಹಾಯವಿಲ್ಲದೆ ಅಮೆರಿಕೆಯ ಬ್ಲಾಕ್ ಹಾಕ ಹೆಲಿಕಾಪ್ಟರ್ ಗಳು ಹೇಗೆ ತಾನೇ ಲಾದೆನ್ ಇರುವಲ್ಲಿಗೆ ಬರಲು ಸಾಧ್ಯ? ಅಲ್ಕೈದಾ ಸಂಘಟನೆಯ ಕೆಂಗಣ್ಣಿಗೆ ಗುರಿಯಾಗಬಹುದು ಎನ್ನುವ ಭೀತಿ ಪಾಕಿಗೆ ತಾನು ಈ ಸಾಹಸದಲ್ಲಿ ಪಾಲು ಗೊಂಡಿಲ್ಲ ಎಂದು ಹೇಳಲು ಪ್ರೇರೇಪಿಸುತ್ತಿರಬಹುದೇ? ಪಾಕಿಸ್ತಾನದ ಪರಿಸ್ಥತಿ ಅಡಕ್ಕೊತ್ತರಿ ಯಲ್ಲಿ ಸಿಕ್ಕ ಅಡಿಕೆಯಂತೆ. ಲಾದೆನ್ ಇರುವ ಸ್ಥಳ ತೋರಿಸಿ ಅಮೆರಿಕೆಗೆ ಸಹಕಾರ ನೀಡಿದೆ ಎಂದರೆ ಅಲ್ ಕೈದಾ ಬಿಡೋಲ್ಲ, ಲಾದೆನ್ ಎಲ್ಲಿದ್ದಾನೆ ಎಂದು ತನಗೆ ತಿಳಿದಿಲ್ಲ ಎಂದರೆ ಅಮೇರಿಕಾ ಬಿಡೋಲ್ಲ. ಸುಮಾರು  ಐದು ವರ್ಷಗಳ ಕಾಲ ದೊಡ್ಡ ಪಾಕಿಸ್ತಾನದ ರಾಜಧಾನಿಯ ಹಿತ್ತಲಿನಲ್ಲಿ,  ಬಂಗಲೆಯೊಂದರಲ್ಲಿ ವಾಸಿಸುತ್ತಿದ್ದ ಲಾದೆನ್ ಬಗ್ಗೆ ಪಾಕ್ ಸೈನ್ಯಕ್ಕೆ, ಸರಕಾರಕ್ಕೆ ತಿಳಿದಿಲ್ಲ ಎಂದರೆ ದೊಡ್ಡ ಆಶ್ಚರ್ಯವೇ. ಒಂದು ವೇಳೆ ಪಾಕಿಗೆ ಲಾದೆನ್ ಪಾಕಿನಲ್ಲಿ ಇರುವ ಅರಿವು ಇಲ್ಲದಿದ್ದರೆ ಅಮೇರಿಕಾ ತಾನು ನೀಡುವ ಉದಾರ ಧನ ಸಹಾಯ ಮುಂದುವರೆಸಬಹುದು. ಅಥವಾ ಲಾದೆನ್ ಪಾಕಿಸ್ತಾನದಲ್ಲಿ ಇರುವುದನ್ನು ಅಮೆರಿಕೆಗೆ ತಿಳಿಸದೇ ಡಬಲ್ ಗೇಂ ಆಡಿದ್ದರೆ ಪಾಕಿಸ್ತಾನವನ್ನು ದಾರಿಗೆ ತರುವ ಕೆಲಸ ಅಮೇರಿಕಾ ಶೀಘ್ರ ಶುರು ಮಾಡಬೇಕು. ಇದೇ ಟೆಸ್ಟು. Litmus ಟೆಸ್ಟು.    

ಬಿನ್ ಲಾದೆನ್ ಇಲ್ಲದೆ ಪಾಕ್ ಹೇಗೆ ತಾನೇ ಜೀವಿಸೀತು ಎನ್ನುವುದೀಗ ಆಸಕ್ತಿಕರ ಪ್ರಶ್ನೆ. ಪ್ರೀತೀ,  ನೀನಿಲ್ಲದೆ ನಾ ಹೇಗಿರಲಿ… ಎಂದು ಶೋಕ ಗೀತೆ ಹಾಡುತ್ತಿರಬಹುದೇ ಪಾಕಿಗಳು?

೨೦೦೧ ರ ಅಮೆರಿಕೆಯ ವಿರುದ್ಧದ ಧಾಳಿಗೆ ಬಿನ್ ಲಾದೆನ್ ನನ್ನು ನೇರ ಹೊಣೆಯಾಗಿರಿಸಿದ ಜಾರ್ಜ್ ಬುಶ್, ಬಿನ್ ಲಾದೆನ್ wanted, dead or alive ಎಂದು ಘೋಷಿಸಿದ. ಅಮೆರಿಕೆಯ ಮೇಲೆ ನಿರ್ದಯೀ, ಭೀಕರ ಧಾಳಿ ಮಾಡಿ ತಾನು ಒಂದು ದಿನ ಪೂರ್ತಿ ರಹಸ್ಯ ಅಡಗು ತಾಣವೊಂದರಲ್ಲಿ ದಿನ ಕಳೆಯುವಂತೆ ಮಾಡಿದ ಬಿನ್ ಲಾದೆನ್ ನ ತಲೆಗೆ ೨೫ ಮಿಲ್ಲಿಯನ್ ಡಾಲರ್ ಮೊತ್ತದ ಬೆಲೆಯನ್ನೂ ಕಟ್ಟಿದ ಬುಶ್.  ಹೊಗೆಯುಗುಳುತ್ತಾ ನೆಲಕ್ಕುರುಳಿದ ನ್ಯೂಯಾರ್ಕ್ ನ ಗಗನ ಚುಂಬಿ ಕಟ್ಟಡಗಳು ಅಮೆರಿಕನ್ನರ ಚಿತ್ತ ಕಲಕಿದವು. ಕ್ರುದ್ಧ ಅಮೇರಿಕಾ ಬಿನ್ ಲಾದೆನ್ ಅಡಗಿದ್ದ ಆಫ್ಘಾನಿಸ್ತಾನ ವನ್ನು ಆಕ್ರಮಣ ಮಾಡಿತು. ಬಿನ್ ಲಾದೆನ್ ಎಲ್ಲಿದ್ದರೂ ಹೊಗೆ ಹಾಕಿ ಹೊರತೆಗೆಯುತ್ತೇನೆ ಎಂದು ಘರ್ಜಿಸಿದ ಬುಶ್ ಆಫ್ಘಾನಿಸ್ತಾನದ ಗುಡ್ಡಗಾಡು ಗಳನ್ನು ಮಾತ್ರವಲ್ಲ ಅಲ್ಲಿನ ತೋರಾ ಬೋರಾ ಗವಿ ಸಮುಚ್ಛಯಗಳನ್ನು ಜಾಲಾಡಿದ. ಸೋವಿಯೆಟ್ ಸೇನೆಗೆ ಚಳ್ಳೆ ಹಣ್ಣು ತಿನ್ನಿಸಿದ್ದ, ಸ್ವತಃ ಅಮೆರಿಕನ್ನರಿಂದಲೇ ತರಬೇತಿ ಪಡೆದ, ಸ್ವಾತಂತ್ರ್ಯ ಹೋರಾಟಗಾರ ಎಂದು ರೋನಾಲ್ಡ್ ರೇಗನ್ನರಿಂದ ಹೊಗಳಿಸಿಕೊಂಡಿದ್ದ  ಬಿನ್ ಲಾದೆನ್ ರಂಗೋಲಿ ಕೆಳಗೆ ತೂರಿಕೊಳ್ಳುವುದನ್ನು ಕರಗತ ಮಾಡಿಕೊಂಡ.  

ಬಿನ್ ಲಾದೆನ್,  wanted, dead or alive ಎಂದ ಅಮೇರಿಕಾ ಲಾದೆನ್ ಇರುವ ಮನೆಯ ಮೇಲೆ ಧಾಳಿ ಮಾಡಿ, ೪೦ ನಿಮಿಷಗಳ ಕಾಳಗದಲ್ಲಿ ಎರಡು ಗುಂಡುಗಳನ್ನು ಲಾದೆನ್ ತಲೆಗೆ ಸಿಡಿಸಿ ಕೊಂದಿದ್ದಾರೂ ಏಕೆ? ಅವನನ್ನು ಜೀವಂತ ಸೆರೆ ಹಿಡಿದು, ಅಮೆರಿಕೆಯ USS COLE , ಆಫ್ರಿಕಾದ ದಾರುಸ್ಸಲಾಮ್, ಸ್ಪೇನ್ ನ MADRID, ಲಂಡನ್, ಸೌದಿ ಅರೇಬಿಯಾದ ದಹರಾನ್, ಇರಾಕ್, ಸೋಮಾಲಿಯಾ, ಇಂಡೋನೇಷ್ಯಾದ ಬಾಲಿ ಮುಂತಾದ ನಗರಗಳ ಮೇಲೆ ಧಾಳಿ ಮಾಡಿದ ಈತನನ್ನು ವಿಚಾರಣೆ ಮಾಡಬಹುದಿತ್ತಲ್ಲ. ಅಮೆರಿಕೆಯ ಕಾರ್ಯ ವೈಖರಿ ಆ ದೇಶದಷ್ಟೇ ನಿಗೂಢ. ಕ್ರಿಸ್ಟಫರ್ ಕೊಲಂಬಸ್ ಕಂಡು ಹಿಡಿಯುವವರೆಗೂ ನಿಗೂಢವಾಗಿದ್ದ ದೇಶವಲ್ಲವೇ ಅಮೇರಿಕಾ? ಈತನನ್ನು ಸೆರೆ ಹಿಡಿದು ಅಮೇರಿಕಾ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿ ಕೊಳ್ಳಲು ಇಷ್ಟ ಪಡಲಿಲ್ಲ. ವಿಚಾರಣೆ ವೇಳೆ ಬಿನ್ ಲಾದೆನ್ ಬಾಯಿ ಬಿಟ್ಟರೆ ತಾವು ಕೇಳಲು ಇಚ್ಛಿಸುವುದಕ್ಕಿಂತ ಸ್ವಲ್ಪ ಹೆಚ್ಚನ್ನೇ ಬಡಬಡಿಸಬಹುದು. ಈ ಕಸಿವಿಸಿಯಿಂದ ಪಾರಾಗಲು ಇರುವ ಒಂದೇ ದಾರಿ ಎಂದರೆ ನೇರ ಆಕ್ರಮಣ. ಈ ಆಕ್ರಮಣದಲ್ಲಿ ಅಮೇರಿಕಾ ಯಶಸ್ಸನ್ನು ಕಂಡಿತು.         

ತಾನು ಕರಿಯನಾದ ಒಂದೇ ಕಾರಣಕ್ಕೆ ದಿನವೂ ಬಿಳಿ ಅಮೆರಿಕನ್ನರ ಕುಹಕಕ್ಕೆ, ಅವಹೇಳನಕ್ಕೆ  ಗುರಿಯಾಗುತ್ತಿದ್ದ ಒಬಾಮ ಕೊನೆಗೆ ತನ್ನ ಜೀವನದ ಅತಿ ದೊಡ್ಡ ಅವಮಾನವನ್ನು ಎದುರಿಸಬೇಕಾಯಿತು. ಒಬಾಮಾರ ಜನನ ಪ್ರಮಾಣ ಪತ್ರವನ್ನು ಬಲ ಪಂಥೀಯ ರಿಪಬ್ಲಿಕನ್ ಪಕ್ಷ ಕೇಳಿತು. ಒಬಾಮಾ ತನ್ನ ಜನನ ಪ್ರಮಾಣ ಪತ್ರದ ಜೊತೆ ಜೊತೆಗೇ ಅಮೆರಿಕನ್ನರ ಸಿಂಹಸ್ವಪ್ನನಾಗಿದ್ದ ಲಾದೆನ್ ನ ಸಾವಿನ ಪ್ರಮಾಣ ಪತ್ರವನ್ನೂ ಅಮೆರಿಕನ್ನರಿಗೆ ನೀಡಿ ತಾನು ಕಾರ್ಯಕ್ಷಮತೆಯಲ್ಲಿ ಯಾವ ಬಿಳಿ ಅಧ್ಯಕ್ಷನಿಗೂ ಕಡಿಮೆಯಲ್ಲ ಎನ್ನುವುದನ್ನು ತೋರಿಸಿ ಕೊಟ್ಟರು.   

ಒಸಾಮಾ ಬಿನ್ ಮುಹಮ್ಮದ್ ಬಿನ್ ಅವಾದ್ ಬಿನ್ ಲಾದೆನ್.  ೫೪ ವರ್ಷ ಪ್ರಾಯದ, ಆರಡಿ ಮೂರಿಂಚು ಎತ್ತರದ ಸ್ಫುರದ್ರೂಪಿ ಮತ್ತು ಆಗರ್ಭ ಶ್ರೀಮಂತ ಆಫ್ಘನ್ ಗುಡ್ಡ ಗಾಡಿನ ಜನರ ವಿಶ್ವಾಸ, ಪ್ರೀತಿ, ಅಭಿಮಾನ ಗಳಿಸಲು ಕಾರಣವಾಗಿದ್ದಾದರೂ ಏನು? ಜನರೊಂದಿಗೆ ಸುಲಭವಾಗಿ, ಆತ್ಮೀಯತೆಯಿಂದ ಬೆರೆಯುತ್ತಿದ್ದ ಈತ ಸೌಮ್ಯ ಮಾತುಗಾರಿಕೆಯಿಂದ, ತನ್ನ ಉದಾರ ಸ್ವಭಾವದಿಂದ ಅಲ್ಲಿನ ಯುವಜನರ ಮನ ಗೆದ್ದಿದ್ದ. ಕೋಟ್ಯಾಧೀಶ ಮನೆತನದಿಂದ ಬಂದ ಈತ ಐಶಾರಾಮದ ಬದುಕನ್ನು ಬಿಟ್ಟು ಆಫ್ಘನ್ ಗುಡ್ಡಗಾಡಿನಲ್ಲಿ ಒಣಗಿದ ಚಪಾತಿ ತಿನ್ನುತ್ತಾ ತಮ್ಮೊಂದಿಗೆ ಇರುತಿದ್ದ ಈತನನ್ನು ಕಂಡು ಜನ ಮಾರುಹೋದರು. ಸೋವಿಯೆಟ್ ಸೈನ್ಯದೊಂದಿಗೆ ಹೋರಾಡಿದ ಈತ ಓರ್ವ ಸೈನಿಕನೊಂದಿಗೆ hand to hand combat ನಲ್ಲಿ ಸೈನಿಕನ್ನು ಕೊಂದು ಅವನ kalashnikov ಬಂದೂಕನ್ನು ವಶಪಡಿಸಿ ಕೊಂಡಿದ್ದ. ಈ ಬಂದೂಕು ಅವನ ಅಭಿಮಾನದ ಸ್ವತ್ತಾಗಿತ್ತು.

ಈತ ಆರಂಭಿಸಿದ ಅಲ್ ಕೈದಾ ಒಂದು ಸಂಘಟನೆಯೋ ಆಗಿರದೆ ಒಂದು ತೆರನಾದ ideology ಆಗಿತ್ತು. ಸದಸ್ಯ ಶುಲ್ಕವಾಗಲೀ, ಯಾವುದೇ formal induction ಆಗಲಿ ಬೇಕಿಲ್ಲದ ಈ ವಿಚಾರಧಾರೆಗೆ ಮೂರು ಅಂಶಗಳೇ ಉರುವಲಾಗಿ ಕೆಲಸ ಮಾಡುತ್ತಿದ್ದವು. ಆಕ್ರೋಶ, ನಿರಾಶೆ, ನಿಸ್ಸಹಾಯಕತೆ (anger, frustration, desperation).  ಒಂದು ಕಡೆ ಮುಸ್ಲಿಂ ದೇಶಗಳಲ್ಲಿನ ಆಳುವವರ ಭ್ರಷ್ಟಾಚಾರ ಸಾಲದು ಎಂಬಂತೆ ಅಮೆರಿಕೆಯ ಮೇಲಿನ ವಿಪರೀತ ಅವಲಂಬನೆ ಮತ್ತು ಅರಬ್ಬರ ಸಂಪತ್ತನ್ನು ಲೂಟಿ ಹೊಡೆಯುತ್ತಾ ಇಸ್ರೇಲ್ ದೇಶವನ್ನು ಸಾಕುತ್ತಿದ್ದ ಅಮೆರಿಕೆಯ ಆಟ ಈತನಲ್ಲಿ ಆಕ್ರೋಶ ಹುಟ್ಟಿಸಿತ್ತು. ಸೌದಿ ದೊರೆಗಳ ವಿರುದ್ಧವೂ ಈತ ಸಮರ ಸಾರಿದ ನಂತರ ಇವನ ವಿರೋಧಿಗಳ ಪಟ್ಟಿ ದೊಡ್ಡದಾಗುತ್ತಾ ಹೋಯಿತು. ಈತನ ನೂರಾರು ಹಿಂಬಾಲಕರಲ್ಲಿ ಹಲವರನ್ನು ಕೊಂದು, ನೂರಾರು ಜನರನ್ನು ಜೈಲಿಗೆ ತಳ್ಳಿ ಅಲ್ ಕೈದಾ ಪಿಡುಗನ್ನು ಕೊನೆಗಾಣಿಸಿದ ಸೌದಿ ಸರಕಾರ ಭಯೋತ್ಪಾದನೆ ತಡೆಯುವಲ್ಲಿ ಯಾವ ಕ್ರಮ ತೆಗೆದು ಕೊಳ್ಳುವುದಕ್ಕೂ ತಾನು ಹೇಸುವುದಿಲ್ಲ ಎಂದು ವಿಶ್ವಕ್ಕೆ ತೋರಿಸಿ ಕೊಟ್ಟಿತು.   

ಯಹೂದಿಗಳ ಕೈಯ್ಯಲ್ಲೂ, ಅಮೆರಿಕೆಯ ಕೈಯ್ಯಲ್ಲೂ ಮುಸ್ಲಿಮರ ಮಾರಣ ಹೋಮ ನೋಡಿದ ಬಿನ್ ಲಾದೆನ್ ಪ್ರತಿಕ್ರಯಿಸಿದ್ದು ಹಿಂಸಾ ಮಾರ್ಗದಿಂದ. ಸುಮಾರು ೧೫೦೦ ವರ್ಷಗಳ ಚರಿತ್ರೆ ಇರುವ ಇಸ್ಲಾಂ ಧರ್ಮಕ್ಕೆ ಬಹುಶಃ ಸ್ವತಃ ಮುಸ್ಲಿಂ ಆದ ಬಿನ್ ಲಾದೆನ್ ಮಾಡಿದಷ್ಟು ಅಪಕಾರ ಬೇರಾರೂ ಮಾಡಿರಲಾರ ರೇನೋ? ತನ್ನ ಕುಕೃತ್ಯಗಳಿಂದ ಎರಡು ಯುದ್ಧಗಳಿಗೆ ಕಾರಣನಾದ, ಎರಡು ದಶಲಕ್ಷಕ್ಕೂ ಅಧಿಕ ಮುಸ್ಲಿಮರ ಸಾವಿಗೆ ಸಾಕ್ಷಿ ನಿಂತ ಬಿನ್ ಲಾದೆನ್ ಅದ್ಯಾವ ರೀತಿ ತಾನು ನಂಬಿದ ಧರ್ಮದ ಸೇವೆ ಮಾಡಿದನೋ ಅವನೇ ಬಲ್ಲ.  ವಿಶ್ವದ ಡಜನ್ ಗಟ್ಟಲೆ ಹೆಚ್ಚು ನಗರಗಳಲ್ಲಿ ಸಾವು ನೋವನ್ನು ತಂದು ನಿಲ್ಲಿಸಿದ ಬಿನ್ ಲಾದೆನ್ ಕೊನೆಗೂ ಹಿಂಸೆಯ ಮೂಲಕವೇ ತನ್ನ ಜೀವ ಕಳೆದುಕೊಂಡ. ಇಂಡೋನೇಷ್ಯಾದ “ಬಾಲಿ” ಯಿಂದ ಹಿಡಿದು ಆಫ್ರಿಕಾದ  ನೈರೋಬಿ ವರೆಗೆ ಸಾವು ನೋವಿನ ಕರಾಳ ಕಂಬಳಿಯನ್ನು ಹರಡಿದ ಬಿನ್ ಲಾದೆನ್ “ವಿನಾಕಾರಣ ಒಬ್ಬನನ್ನು ಕೊಂದರೆ ಇಡೀ ಮನುಕುಲವನ್ನು ಕೊಂದಂತೆ” ಎಂದ ಹೇಳಿದ ತನ್ನ ಭಗವಂತನ ಮುಂದೆ ನಿಂತು ಯಾವ ಸಮಜಾಯಿಷಿ ನೀಡುವನೋ?

ಬಿನ್ ಲಾದೆನ್ ನಿರ್ಗಮನದಿಂದ ನಮ್ಮೀ ವಿಶ್ವ ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಗೆ ಕಾಲಗರ್ಭದಲ್ಲಿ ಅಡಗಿದೆ  ಉತ್ತರ.

ಟ್ವಿಟ್ಟರ್ ನಲ್ಲಿ ಸಿಕ್ಕಿದ್ದು:

Kentucky Fried Chicken ಶುರು ಮಾಡಿದ “ಕರ್ನಲ್ ಸ್ಯಾಂಡರ್ಸ್” ನ ನಿಧನದೊಂದಿಗೆ KFC ಯ franchising ನಿಲ್ಲಲಿಲ್ಲ. ಅದೇ ರೀತಿ ಅಲ್ ಕೈದಾ ಸ್ಥಾಪಕನ ಸಾವಿನಿಂದ ಅಲ್ ಕೈದಾ ಸಹ ಮುಗಿಯೋದಿಲ್ಲ.  ಆದರೆ ಇದೇ ವೇಳೆ, ಅಂತರಾಷ್ಟ್ರೀಯ ಖ್ಯಾತಿಯ, ಸಂಪಾದಕ ಭಾರತೀಯ ಮೂಲದ ಫರೀದ್ ಜಕರಿಯಾ ಹೇಳಿದ್ದು, loss of a symbol can end a movement.  

ವಿ. ಸೂ: ನನ್ನ ಈ ಲೇಖನ ಬಿನ್ ಲಾದೆನ್ ನ ಅವಸಾನ ಮತ್ತು ಅವಸಾನದ ಕ್ಷಣಗಳನ್ನು ಅಮೆರಿಕೆಯ ವೃತ್ತಾಂತವನ್ನು ಆಧರಿಸಿದ್ದು. ಯಾವುದೇ independent confirmation ಯಾರಿಗೂ ಲಭ್ಯವಾಗಿಲ್ಲ.      

 

Switzerland. ಭೂಮಿಯ ಮೇಲಿನ ಸ್ವರ್ಗ

Switzerland. ಭೂಮಿಯ ಮೇಲಿನ ಸ್ವರ್ಗ ಮಾತ್ರವಲ್ಲ ಸ್ವರ್ಗ ನವವಿವಾಹಿತ ಶ್ರೀಮಂತ ಜೋಡಿಗಳ ಮಧುಚಂದ್ರ ದ ತಾಣ ಕೂಡಾ. ಯುವ ಜೋಡಿಗಳ ಡ್ರೀಂ ಡೆಸ್ಟಿನೇಶನ್. ನಮ್ಮ ಕಾಶ್ಮೀರದಂತೆ. ಮನೋಹರ, ಹಿಮಚ್ಛಾದಿತ ಆಲ್ಪ್ಸ್ ಪರ್ವತ ಶ್ರೇಣಿ, swiss army knife, ವಿಶ್ವ ಪ್ರಸಿದ್ಧ Lindt chocolate, ಬೆಲೆಬಾಳುವ ವಾಚುಗಳ ಉತ್ಪಾದನೆ, ಮತ್ತು ವಿಶ್ವ ರಾಜಕಾರಣದಲ್ಲಿ ಯಾರ ಗೊಡವೆಗೂ ಹೋಗದೆ ತಟಸ್ಥ ನೀತಿ ಅನುಸರಿಸುವ ಒಂದು ಪುಟ್ಟ, ಅತಿ ಶ್ರೀಮಂತ ದೇಶ ಸ್ವಿಟ್ಜರ್ ಲ್ಯಾಂಡ್. ಇದು ನಮ್ಮ ಮುಗ್ಧ  ತಿಳಿವಳಿಕೆ ಈ ಪುಟ್ಟ ದೇಶದ ಬಗ್ಗೆ. 

ಆದರೆ ತನ್ನ ಸುತ್ತಲೂ ಶುಭ್ರ, ಮಂಜಿನ ಪರ್ವತವನ್ನೇ ಇಟ್ಟುಕೊಂಡ ಈ ಪುಟ್ಟ ದೇಶ ತನ್ನ ಒಡಲೊಳಗೆ ಇಟ್ಟುಕೊಂಡಿರುವುದು, ಶ್ರೀಮಂತವಾಗಿರುವುದು ಪಾಪದ ಹಣದ ಸಹಾಯದಿಂದ ಎಂದು ಹೇಳಿದರೆ ಹೌಹಾರುವಿರಾ?  

ವಿಶ್ವದ ಎಲ್ಲಾ ಭ್ರಷ್ಟ ರಾಜಕಾರಣಿ, ಅಧಿಕಾರಿ, ಕೈಗಾರಿಕೋದ್ಯಮಿ, ಕಳ್ಳ ಸಾಗಣೆದಾರ, ಮಾದಕ ದ್ರವ್ಯದ ವ್ಯಾಪಾರಿ ಹೀಗೆ ಹತ್ತು ಹಲವು ವರ್ಣರಂಜಿತ ವ್ಯಕ್ತಿತ್ವಗಳು ಲೂಟಿಗೈದ ಹಣವನ್ನು ಬಚ್ಚಿಡಲು ಆರಿಸಿಕೊಂಡ ತಾಣವೇ ಸ್ವಿಟ್ಜರ್ ಲ್ಯಾಂಡ್. ಫ್ರಾನ್ಸ್, ಜರ್ಮನಿ, ಆಸ್ಟ್ರಿಯ, ಇಟಲಿ ದೇಶಗಳಿಂದ ಸುತ್ತುವರೆದ ಸ್ವಿಸ್ಸ್, ಒಳ್ಳೆ ಬೆಚ್ಚಿಗಿನ ದೇಶ ಲೂಟಿ ಕೋರರಿಗೆ, ಪುಂಡರಿಗೆ. ಇದಕ್ಕಿಂತ ಬೆಚ್ಚಗಿನ, ರಹಸ್ಯ ಸ್ಥಳ ಬೇರೆಲ್ಲಿ ಸಿಗಲು ಸಾಧ್ಯ ಕಳ್ಳ ಧನವನ್ನು ಬಚ್ಚಿಡಲು, ಅಲ್ಲವೇ?   

ಭಾರತೀಯರು ಕೋಟಿಗಟ್ಟಲೆ ತೆರಿಗೆ ವಂಚಿಸಿದ, ನಮ್ಮ ಸಂಪನ್ಮೂಲ ಕದ್ದ, ಲಂಚದ ಮೂಲಕ ಗಳಿಸಿದ ಪಾಪದ ಹಣವನ್ನೂ ಸ್ವಿಸ್ ರೀತಿಯದೇ ಆದ Liechtenstein (ಲೀಚ್ಟೆನ್ ಸ್ಟೈನ್, ಯೂರೋಪ್ ನ ಮತ್ತೊಂದು ಮೈಕ್ರೋ ಸ್ಕೋಪಿಕ್ ದೇಶ )  ಬ್ಯಾಂಕ್ ನಲ್ಲಿ ಹೂತು ಹಾಕಿರುವುದನ್ನು ತೆಹೆಲ್ಕಾ ಬಯಲಿಗೆ ಹಾಕಿದೆ. ಸುಮಾರು ಹದಿನೈದು ಜನರ ಹೆಸರನ್ನು ಬಹಿರಂಗ ಗೊಳಿಸಿರುವ ತೆಹೆಲ್ಕಾ ಬರುವ ದಿನಗಳಲ್ಲಿ ಇನ್ನಷ್ಟು ಮಾಹಿತಿಯನ್ನು ಹೊರಗೆಡವಲಿದೆ.  

ಸ್ವಿಸ್ ದೇಶದಲ್ಲಿ ಅಕ್ರಮವಾಗಿ ಧನ ಗುಡ್ಡೆ ಹಾಕಿರುವ ಜನರ ಹೆಸರುಗಳನ್ನು ಅಲ್ಲಿನ ಬ್ಯಾಂಕುಗಳು ಬಹಿರಂಗ ಪಡಿಸಬೇಕು. ನಮ್ಮ ಸಂಪನ್ಮೂಲಗಳನ್ನು ಲೂಟಿ ಮಾಡಿದ್ದೂ ಅಲ್ಲದೆ ಲೂಟಿಗೈದ ಸಂಪತ್ತಿಗೆ ತೆರಿಗೆಯನ್ನೂ ಕಟ್ಟದೆ ದುರಹಂಕಾರದಿಂದ ಮೆರೆಯುವ, ಶ್ರೀಮಂತರು ತಾವು ತಿಂದಿದ್ದನ್ನು ಕಕ್ಕಬೇಕು. ದೇಶದಲ್ಲಿ ಆಗಾಗ ಹೊರಬೀಳುತ್ತಿರುವ ಪ್ರತೀ ಹಗರಣದ ಹಿಂದೆಯೂ ಲಕ್ಷಾಂತರ ಕೋಟಿ ರೂಪಾಯಿಗಳ ಲೂಟಿಯ ಮಾಹಿತಿ ಇದ್ದೂ ನಾವು ಏನೂ ಮಾಡಲಾಗದ ಅಸಹಾಯಕ ಪರಿಸ್ಥಿತಿ.  ಅದರ ಮೇಲೆ ಭಾರತ ಬಡ ದೇಶ ಎನ್ನುವ ಪಟ್ಟ ಬೇರೆ.  ಹೆಚ್ಚು ಎಂದರೆ ಅವನು ರಾಜಕಾರಣಿಯಾದರೆ ರಾಜೀನಾಮೆ ನೀಡಬಹುದು ಅಷ್ಟೇ. ರಾಜೀನಾಮೆ ನಂತರ ತಾನು ಕಬಳಿಸಿದ ಸಂಪತ್ತನ್ನು ಜೀವನ ಪೂರ್ತಿ ತಾನು ತನ್ನ ಮಕ್ಕಳು ತಿನ್ನಬಹುದು. ಜನರ ಮನ್ನಣೆಯನ್ನೂ ಗಳಿಸಿಕೊಳ್ಳಬಹುದು. ಇಂಥ ಲಕ್ಷಾಂತರ ಕೋಟಿ ರೂಪಾಯಿಗಳನ್ನು ಒಳಗೊಂಡ ಹಗರಣಗಳನ್ನು ನೋಡಿದಾಗ ನಮಗನ್ನಿಸದೆ ಇರುತ್ತದೆಯೇ ನಮ್ಮ ದೇಶ ನಾವೆಣಿಸಿದಂತೆ ಬಡ ದೇಶವಲ್ಲ ಎಂದು?  

ತನ್ನ ಸ್ವ- ರಕ್ಷಣೆಗಾಗಿ ಅಥವಾ ಇಂಧನದ ಅವಶ್ಯಕತೆಗಾಗಿ ಅಣು ಸ್ಥಾವರಗಳನ್ನು ನಿರ್ಮಿಸಿದ್ದಕ್ಕೆ ಇರಾನಿನ ಮೇಲೆ ಹರಿ ಹಾಯುವ ಪಾಶ್ಚಾತ್ಯ ದೇಶಗಳು ಸ್ವಿಸ್ ತೆರನಾದ ಮೋಸದ ಜಾಲದ ಬಗ್ಗೆ ಮಾತ್ರ ಮೌನ ತಾಳಿರುವುದು  ಆಷಾಢ ಭೂತಿತನದ ಪರಮಾವಧಿ. ಕೊಳಕು ಹಣವನ್ನು ಒಡಲಲ್ಲಿಟ್ಟುಕೊಂಡು ವಿಶ್ವಕ್ಕೆ ತಾನು ಸಭ್ಯಸ್ಥ ಎಂದು ತೋರಿಸುವ ಸ್ವಿಸ್ ಪರಿಪಾಠ ಹೇಸಿಗೆ ಹುಟ್ಟಿಸುವಂಥದ್ದು. ಮೋಸದ, ಲಂಚದ ಹಣವನ್ನು ರಹಸ್ಯವಾಗಿ,  ಜೋಪಾನವಾಗಿರಿಸಿ ಬಡ ದೇಶಗಳಲ್ಲಿರುವ ಲಂಚಗುಳಿತನದ ಬಗ್ಗೆ ಮರುಕ ತೋರುತ್ತಾ ತಾನು ವಿಶ್ವದಲ್ಲಿ ಲಂಚ ರಹಿತ ದೇಶ ಎಂದು ತೋರಿಸಿಕೊಳ್ಳುವ ದೇಶದ ಬಗ್ಗೆ ಏನೆನ್ನಬೇಕೋ ತಿಳಿಯದು. ಬ್ಯಾಂಕಿಂಗ್ ಗೌಪ್ಯವನ್ನು ಕಾಪಾಡಲು ಸ್ವಿಟ್ಜರ್ ಲ್ಯಾಂಡ್ ನ ೭೩ % ಜನ ರ ಬೆಂಬಲವಿದೆಯಂತೆ. ಇಲ್ಲದೆ ಏನು, ಈ ಕಳ್ಳ ಹಣದ ನೆರವಿನಿಂದಲೇ ಅಲ್ಲವೇ ಅವರ ಬಾಳು ಬೆಳಗುತ್ತಿರುವುದು.

ಭಯೋತ್ಪಾದಕರು ಯಾವುದಾದರೂ ದೇಶದಲ್ಲಿ ಅಡಗಿ ಕೂತರೆ ಅವರನ್ನು ಹೊಗೆ ಹಾಕಿ ಹೊರಕ್ಕೆಳೆಯುವ ಅಮೆರಿಕೆಯಾಗಲಿ, ಅಥವಾ ಇನ್ಯಾವುದೇ ದೇಶವಾಗಲೀ ಸ್ವಿಸ್ ಬ್ಯಾಂಕುಗಳಲ್ಲಿ ಬಡ ದೇಶಗಳ ಧನ ಲೂಟಿ ಮಾಡಿ ಕಲೆಹಾಕಿದ್ದಕ್ಕೆ ಸ್ವಿಸ್ ದೇಶವನ್ನು ದಂಡಿಸಲು ಸಾಧ್ಯವೇ? ಭಯೋತ್ಪಾದಕ ಕೃತ್ಯದಲ್ಲಿ ಒಬ್ಬ ಭಾಗಿಯಾಗಿಲ್ಲದಿದ್ದರೂ ಓರ್ವ  ಭಯೋತ್ಪಾದಕನಿಗೆ ಆಶ್ರಯ ನೀಡುವುದೂ ಭಯೋತ್ಪಾದನೆಗೆ ಸಹಕರಿಸಿದ್ದಂತೆ. ಈ ಮಾನದಂಡವನ್ನು ಸ್ವಿಸ್ ನಂಥ ದೇಶಗಳ ಮೇಲೆ ಏಕೆ ಉಪಯೋಗಿಸಬಾರದು?  ಲೂಟಿ ಮಾಡಿದವ ಮಾತ್ರ ಕಳ್ಳನಲ್ಲ, ಅವನ ಲೂಟಿಯನ್ನು ಜಾಗರೂಕತೆಯಿಂದ ಕಾಯುವುದೂ ಠಕ್ಕತನವೇ.  

ಸ್ವಿಸ್ ದೇಶದ ಗಿರಾಕಿಗಳಲ್ಲಿ ಬರೀ ಲಂಚ ತಿನ್ನುವ ರಾಜಕಾರಣಿಗಳು ಮಾತ್ರವಲ್ಲ. ಮೆಕ್ಸಿಕೋ ದೇಶದ ಮಾದಕ ದ್ರವ್ಯ ಮಾರುವ ದೊರೆಗಳು ಸಹ ಇಲ್ಲಿ ಹಣ ಅಡಗಿಸಿಡುತ್ತಾರೆ. ಅಂದರೆ ಪ್ರಪಂಚವನ್ನು ಕಾಡುತ್ತಿರುವ ಎಲ್ಲ ರೀತಿಯ ಪೀಡೆಗಳಿಗೆ ಸ್ವಿಸ್ ನೇರ ಹೊಣೆ ಎಂದರೆ ತಪ್ಪಾಗಬಹುದೇ?

ನೈಜೀರಿಯಾದ ಸಾನಿ ಅಬಾಚ, ಕೀನ್ಯಾದ ಡೇನಿಯಲ್ ಅರಪ್ ಮೊಯ್, ಫಿಲಿಪ್ಪಿನ್ಸ್ ದೇಶದ ಮಾರ್ಕೋಸ್, ನೆರೆಯ ಪಾಕಿಸ್ತಾನದ ಭುಟ್ಟೋ ಪರಿವಾರ, ಇಂಥ ಸರ್ವಾಧಿಕಾರಿಗಳು ಮತ್ತು ಭ್ರಷ್ಟರು ಸ್ವಿಸ್ ದೇಶದ ಮಿತ್ರರುಗಳು. ಆಂಗ್ಲ ಭಾಷೆಯಲ್ಲಿನ ಗಾದೆ; A person is known by the company he keeps.   

ವಿಶ್ವ ಸಮುದಾಯದಲ್ಲಿ ಸ್ವಿಸ್ ತಟಸ್ಥ ದೇಶವಾದರೆ ಮಾತ್ರ ಸಾಲದು, ಒಂದು ಜವಾಬ್ದಾರಿಯುತ ದೇಶವಾಗಿ ವಿಶ್ವದ ಬಡಜನರ, ಹತಾಶೆಗೂ ಸಹ ಸ್ಪಂದಿಸಬೇಕಾದ್ದು ಅತ್ಯಗತ್ಯ. ಬಡದೇಶಗಳ ಸಂಪತ್ತನ್ನು ಲೂಟಿ ಮಾಡಿದ ನಾಯಕರುಗಳ ಬ್ಯಾಂಕ್ ಖಾತೆಯನ್ನು ರಹಸ್ಯವಾಗಿರಿಸಿ ತನ್ಮೂಲಕ ಹಗಲು ದರೋಡೆಗೆ ಪರೋಕ್ಷ ಸಹಾಯ ನೀಡುತ್ತಿರುವ ಸ್ವಿಸ್ ಒಂದು ಪರಾವಲಂಬಿ ದೇಶ ಎನ್ನುವ ಬಿರುದು ಕಟ್ಟಿಕೊಂಡು ಬದುಕುವುದು ಬೇಡ. ಶೀತಲ ವಾತಾವರಣದ ಜನರ ಭಾವನೆಗಳು ಶೀತಲವಾಗಿಬಿಟ್ಟರೆ ಆಗುವ ಅನಾಹುತಕ್ಕೆ ಸ್ವಿಸ್ಸ್ ದೇಶವೇ ಸಾಕ್ಷಿಯೇನೋ? ಹಸಿವು, ರೋಗ, ಕುಡಿಯುವ ಸ್ವಚ್ಚ ನೀರಿನ ಅಭಾವ, ರಸ್ತೆ, ಆಸ್ಪತ್ರೆ, ಶಾಲೆಗಳ ತೀವ್ರ ಕೊರತೆ ಮುಂತಾದ ನೂರೊಂದು ಸಾಮಾಜಿಕ ಸಮಸ್ಯೆಗಳಿಂದ ಬಡ ದೇಶಗಳ ಜನ ಬಳಲುತ್ತಿದ್ದರೆ ತನ್ನ ತಿಜೋರಿಯನ್ನು ಪಾಪದ ಹಣದಿಂದ ಅಲಂಕರಿಸುವುದು ಬೇಡ. 

 ಬಡ ರಾಷ್ಟ್ರಗಳು ತಮ್ಮ ದೇಶದಿಂದ ಹೊರ ಹೋದ ಹಣಕ್ಕಾಗಿ ಸ್ವಿಸ್ ದೇಶವನ್ನು ಸಂಪರ್ಕಿಸಿದಾಗ ಕಾನೂನು ತೊಡಕುಗಳನ್ನು ಕಾರಣವಾಗಿಸಿ ಅವರಿಗೆ ನ್ಯಾಯವಾಗಿ ಸಲ್ಲಬೇಕಾದ ಹಣವನ್ನು ಕೊಡದೆ ವರ್ಷಗಟ್ಟಲೆ ಕಾಯಿಸಿದರು. ಈ ಅವಧಿಯಲ್ಲಿ ಈ ಬಡ ರಾಷ್ಟ್ರಗಳಲ್ಲಿ ಹೊಟ್ಟೆಗಿಲ್ಲದೆ, ಔಷಧಿ ಇಲ್ಲದೆ ಸತ್ತ ಜನರ ಸಂಖ್ಯೆ ಅದೆಷ್ಟೋ ದೇವರೇ ಬಲ್ಲ. ತನ್ನ ಪ್ರಜೆಗಳು ಕೊಬ್ಬು ತುಂಬಿದ ಸ್ಟೇಕ್ ತಿನ್ನುತ್ತಾ ವೈನು, ಬೀರು ಸವಿಯುತ್ತಿದ್ದರೆ ಬಡ ದೇಶಗಳ ಬಹುಸಂಖ್ಯಾತ ಜನ ಒಪ್ಪೊತ್ತಿನ ಅನ್ನವಿಲ್ಲದೆ ನರಳುವ ದೃಶ್ಯ ವಿಶ್ವದ ಅಸಹಾಯಕತೆಯನ್ನು ಎತ್ತಿ ತೋರಿಸುತ್ತದೆ. ನಮ್ಮ ದೇಶದಿಂದ ಸ್ವಿಸ್ ದೇಶಕ್ಕೆ ವಲಸೆ ಹೋದ ಅಗಾಧ ಸಂಪತ್ತು ಮರಳಿ ಬಂದರೆ ಕೆಳಗೆ ತೋರಿಸಿದ ಮಕ್ಕಳ ಅಸಹಾಯಕ ಪರಿಸ್ಥಿತಿ ಸುಧಾರಿಸಲು ನೆರವಾಗಬಹುದು.

ಆರು ವರ್ಷ ಪ್ರಾಯದ ವಿಶಾಲ್ ಒಂದು ಕಪ್ ಚಹಾ ಮತ್ತು ಎರಡು ತುಂಡು ಬಿಸ್ಕಿಟ್ ಒಂದಿಗೆ ತನ್ನ ದಿನವನ್ನು ಆರಂಭಿಸುತ್ತಾನೆ. ಬಡ ಮಕ್ಕಳಿಗೆ ಪುಕ್ಕಟೆಯಾಗಿ ಹಂಚುವ ಚಿತ್ರಾನ್ನ ಅವನ ಮಧ್ಯಾಹ್ನದ ಊಟ. ಅದರಲ್ಲಿ ಅರ್ಧ ತಿಂದು ಮತ್ತೊಂದಿಷ್ಟನ್ನು ತೆಗೆದಿಡುತ್ತಾನೆ ಹಸಿದಾಗ ತಿನ್ನಲು. ರಾತ್ರಿ ಹಸಿದಾಗ ಐದು ರೂಪಾಯಿಯ ಕುರ್ಕುರೆ ಕೊಡಿಸುತ್ತಾಳೆ ಅವನ ತಾಯಿ. ಈ ತಿನಿಸುಗಳೇ ಅವನ ಒಂದು ದಿನದ ಆಹಾರ. ಇಷ್ಟು ತಿಂದಾಗ ವಿಶಾಲನಿಗೆ ಸಿಗುವ ಕ್ಯಾಲೋರಿಗಳು ೮೫೬.

ಎರಡು ವರ್ಷದ ಸುರ್ಜ ಕೊಲ್ಕತ್ತಾದ ಕಲ್ಯಾಣಿ ರೈಲ್ವೆ ಸ್ಟೇಶನ್ ನ ಪ್ಲಾಟ್ಫಾರ್ಮ್ ನಾಲ್ಕರಲ್ಲಿ ಮನೆ ಮಾಡಿ ಕೊಂಡಿದ್ದಾನೆ. ಬೆಳಗ್ಗಿನ ತಿಂಡಿಗೆ ಅರ್ಧ ಪೂರಿ. ಮಧ್ಯಾಹ್ನ, ಎರಡು ಹಿಡಿ ಅನ್ನ ಮತ್ತು ಬೇಳೆ ಸಾರು. ರಾತ್ರಿ ಮತ್ತೆರಡು ಹಿಡಿ ಅನ್ನ, ಸಾರು ಅಥವಾ ಒಂದು ರೊಟ್ಟಿ. ಸುರ್ಜ, ಐದು ವರ್ಷಗಳ ತನ್ನ ಅಕ್ಕ, ಮತ್ತು ಕುಷ್ಠ ರೋಗಿ ತಂದೆಯೊಂದಿಗೆ ವಾಸಿಸುತ್ತಾನೆ. ಬೇಡಿ ತಿನ್ನುವುದು ಅವರ ಬದುಕು. ದಿನಕ್ಕೆ ೨೦ – ೨೫ ರೂಪಾಯಿ ದುಡಿಯುತ್ತಾರೆ. ರೈಲು ಪ್ರಯಾಣಿಕರು ತಿಂದು ಉಳಿದುದನ್ನು ಇವರು ತಿಂದು ಬದುಕುತ್ತಾರೆ. ಇವರಿಗೆ ದೊರಕುವ ಕ್ಯಾಲೋರಿ ಹೆಚ್ಚು ಕಡಿಮೆ ವಿಶಾಲನಷ್ಟೇ. ನಮ್ಮ ಹೊಟ್ಟೆ ಬಡಿದ ಪಾಶ್ಚಾತ್ಯ ದೇಶಗಳ ಮಕ್ಕಳು ತಿನ್ನುವ ತಿನಿಸು ಮತ್ತು ಅವರಿಗೆ ಲಭ್ಯವಾಗುವ ಕ್ಯಾಲೋರಿ ಬಗ್ಗೆ ಬರೆಯಬೇಕೆ? ಬೇಡ ಬಿಡಿ, ಅವರಾದರೂ ತಿಂದುಂಡು ಚೆನ್ನಾಗಿರಲಿ.

child, Relief and You (CRY) ನಡೆಸಿದ ಸಮೀಕ್ಷೆಯ ವೇಳೆ ಸಿಕ್ಕಿದ ಚಿತ್ರಣ ಮೇಲಿನದು. CRY ಸಂಸ್ಥೆಗೆ ಸ್ವಿಸ್ ಸೇರಿ ಬಿಳಿಯ ದೇಶಗಳು ಧಾರಾಳವಾಗಿ ದಾನ ಕೊಡುತ್ತಿರಬಹುದು. ನಮ್ಮ ನಾಯಕರುಗಳು ಪೇರಿಸಿಟ್ಟ ಧನದ ಮೇಲೆ ಅವರಿಗೆ ಸಿಗುವ ಬಡ್ಡಿಯ ಒಂದಿಷ್ಟು ಅಂಶ. LET POOR KIDS FROM THIRD WORLD COUNTRIES SURVIVE ಅಂತ ಕನಿಕರದಿಂದ ದಾನ ಮಾಡುತ್ತಾರೆ ಬಿಳಿಯರು.   

“ವಿಶ್ವ ಹಸಿವಿನ ಸೂಚಿ” (world hunger index)  ಪ್ರಕಾರ ವಿಶ್ವದ ಪೌಷ್ಟಿಕಾಂಶ ಕೊರತೆಯಿರುವ ಶೇಕಡಾ ೪೨ ರಷ್ಟಿರುವ ಮಕ್ಕಳಲ್ಲಿ ಸುಮಾರು ಅರ್ಧದಷ್ಟು ಮಕ್ಕಳು ಭಾರತದಲ್ಲಿ ಇದ್ದಾರಂತೆ. India shining? ಕ್ಷಮಿಸಿ india starving ಎಂದಿರಬೇಕಿತ್ತು. india shining ಎಂದು ಹೇಳಿ ನಮಗೆ ಗರಿ ಗರಿಯಾದ ಟೋಪಿ ತೊಡಿಸಲು ಬಂದ ನಮ್ಮ ನಾಯಕರಿಗೆ ಹಾಸ್ಯ ಪ್ರಜ್ಞೆ ಇಲ್ಲ ಎಂದು ಹೇಳಿದವರಾರು?

ನನ್ನ ಮನವಿ ಇಷ್ಟೇ. ಸ್ವಿಸ್ ಬ್ಯಾಂಕುಗಳಲ್ಲಿ ಕೊಳೆಯಲು ಹಾಕಿರುವ ಹಣ ನಮ್ಮ ದೇಶಕ್ಕೆ ಹಿಂತಿರುಗಲಿ. ಲೂಟಿ ಮಾಡಿದವರ ಮೇಲೆ ಸೇಡು ಬೇಡ. ಅವು ಆಗುವ ಹೋಗುವ ಕೆಲಸಗಳಲ್ಲ. ಅವರನ್ನು ಕ್ಷಮಿಸೋಣ ಆದರೆ ನಮ್ಮ ಸಂಪತ್ತು ಮಾತ್ರ ರವಾನೆಯಾಗಲಿ ಭಾರತಕ್ಕೆ.