ಧರ್ಮ ಮತ್ತು ಹಿಂಸೆ

“ಜಗತ್ತಿನಲ್ಲಿನ ಜಿಹಾದ್ ಮೂಲಕ “ಕಾಷಿರ್”(ಸುಳ್ಳು ದೇವರ ಆರಾಧಕರು ಅಥವಾ false religion worshipers) ಜನರನ್ನು ಕೊಂದು ನಮ್ಮ ಸತ್ಯ ಮತ್ತು ಏಕೈಕ ದೇವರ ಸಾಮ್ರಾಜ್ಯವನ್ನು ಸ್ಥಾಪಿಸಬೇಕು ಎಂದು ನಂಬುತ್ತದೆ” ಎಂದು ಅಂತರ್ಜಾಲದ ಮಾಧ್ಯಮವೊಂದರಲ್ಲಿ ಒಬ್ಬರ ಅಭಿಪ್ರಾಯ. ಮೇಲಿನ ಹೇಳಿಕೆ ನನ್ನ ಪ್ರಕಾರ ಬಾಲಿಶ. ಭಯೋತ್ಪಾದನೆ ಇಸ್ಲಾಂ ಧರ್ಮ ವಿರೋಧಿ ಎಂದು ಭಾರತದ ಮಾತ್ರವಲ್ಲ ಜಗತ್ತಿನ ಎಲ್ಲಾ ಮುಸ್ಲಿಮ ಧರ್ಮಗುರುಗಳು (ಉಲೇಮ) ಹೇಳಿಕೆ ನೀಡಿದ್ದಾರೆ. “ಕಾಫಿರ್” ಅನ್ನುವ ಪದದ ಬಗ್ಗೆ ಬಹಳಷ್ಟು ವಿವಾದಗಳಿವೆ. ಮುಸ್ಲಿಮೇತರರನ್ನು ಕಾಫಿರರೆಂದು ತೆಗಳಬಾರದು ಮತ್ತು ಸಂಬೋಧಿಸಬಾರದೆಂದು ಮುಸ್ಲಿಂ ಪಂಡಿತರ ಅಭಿಪ್ರಾಯ. ಅಷ್ಟಕ್ಕೂ ಕಾಫಿರ್ ಅನ್ನುವ ಪದಕ್ಕೆ ಹಲವು ಅರ್ಥಗಳಿವೆ. ಕಾಫಿರ್ ಅಂದರೆ “ವಿರೋಧಿಸುವವ” ಮತ್ತು “ಮರೆಮಾಚುವವ” ಎಂದೂ ಅರ್ಥೈಸುತ್ತಾರೆ. ಹೊಲದಲ್ಲಿ ರೈತ ಬೀಜ ಬಿತ್ತುವುದಕ್ಕೆ “ಕುಫ್ರ್” (ಕಾಫಿರ್ ನ ಮೂಲ ಪದ “ಕುಫ್ರ್”) ಎನ್ನುತ್ತಾರೆ, ಅಂದರೆ ಆತ ಬೀಜವನ್ನು ಬಿತ್ತಿ ಮಣ್ಣಿನಿಂದ ಮುಚ್ಚುತ್ತಾನೆ ಎಂದು ಅರ್ಥ. ನಿತ್ಯ ಜೀವನದಲ್ಲಿ ಮುಸ್ಲಿಮರನ್ನು ಧ್ವೇಷದಿಂದ ನಾವು ಸಾಬ, ತುರ್ಕ, ಮುಸಲ, “ಹಲಾಲ್ ಖೋರ್” (ಸಂಪದದಲ್ಲಿ ಕೇಳಿದ್ದು) ಹೀಗೆ ವಿವಿಧ ನಾಮಾವಳಿಗಳಿಂದ ಕರೆದು ಹಿಗ್ಗುವುದು ಒಂದು ಪರಿಪಾಠವಾದಾಗ ಹಾಗೆ ಕರೆಯುವವರನ್ನು ಬಹುಶಃ ಮುಸ್ಲಿಮರು ಬೇಸರದಿಂದ ಕಾಫಿರರೆಂದು ಕರೆಯುತ್ತಾರೇನೋ. ಆದರೂ ಬಹುಪಾಲು ಮುಸ್ಲಿಮರು ಹಿಂದೂಗಳನ್ನು ಹಾಗೆ ಕರೆಯುವುದನ್ನು ನಾನು ಕೇಳಿಲ್ಲ. (personally, any amount of provocation will not entice or induce me to label people as kafirs) ಒಬ್ಬನ ಮನಸ್ಸನ್ನು ನೋಯಿಸುವುದು, ಘಾಸಿಗೊಳಿಸುವುದು ಒಂದು ಮಸೀದಿಯನ್ನು ಕೆಡವಿದಂತೆ ಎಂದು ಹಿರಿಯರು ಹೇಳುತ್ತಾರೆ. ಅಂಥ ಉನ್ನತ ಸಂಸ್ಕಾರದಲ್ಲಿ ಮಿಂದ ಒಬ್ಬ ವ್ಯಕ್ತಿ ಯಾರ ಮನಸ್ಸನ್ನೂ ನೋಯಿಸುವುದಿಲ್ಲ.

“ಸೆಮೆಟಿಕ್” ಧರ್ಮಗಳು ಎಂದರೆ ಪ್ರವಾದಿ ಅಬ್ರಹಾಮರ ಧರ್ಮವನ್ನು ನಂಬಿ ನಡೆಯುವವರು ಎಂದು ಸಾಮಾನ್ಯ ತಿಳಿವಳಿಕೆ. ಸೆಮೆಟಿಕ್ ಪದಕ್ಕೆ ಬಹು ದೊಡ್ಡ ವ್ಯಾಖ್ಯಾನವಿದೆ. ಯಹೂದ್ಯ, ಕ್ರೈಸ್ತ, ಇಸ್ಲಾಂ ಧರ್ಮಗಳು ಸೆಮೆಟಿಕ್. ಆದರೂ ಸಹ ಕ್ರೈಸ್ತರು ಮತ್ತು ಯಹೂದ್ಯರು ಇಸ್ಲಾಮ್ ಧರ್ಮವನ್ನ ಸೆಮೆಟಿಕ್ ಎಂದು ಭಾವಿಸುವುದಿಲ್ಲ. ಇಸ್ಲಾಂ ಯಹೂದ್ಯರ “ಮೋಸೆಸ್”, ಮತ್ತು ಕ್ರೈಸ್ತರ “ಏಸು” ಇವರುಗಳನ್ನು ದೇವನ ಸಂದೇಶವಾಹಕರು ಎಂದು ನಂಬಿ ಗೌರವಿಸುತ್ತಾರೆ. ಅವರುಗಳನ್ನು ಏಕ ವಚನದಲ್ಲೂ ಸಂಬೋಧಿಸುವುದಿಲ್ಲ. ಅವರ ಹೆಸರುಗಳನ್ನು ತಮ್ಮ ಮಕ್ಕಳಿಗೆ ನಾಮಕರಣವನ್ನೂ ಮಾಡುತ್ತಾರೆ.(ನನ್ನ ಮಗಳ ಹೆಸರು “ಇಸ್ರಾ ಮರ್ಯಮ್”. ಮರ್ಯಮ್, ಯೇಸು ಮಾತೆ) ಪ್ರವಾದಿಗಳು ಯಹೂದ್ಯರನ್ನು ಮತ್ತು ಕ್ರೈಸ್ತರನ್ನು “ಒಡಂಬಡಿಕೆಗಳ ಜನ” ಎಂದು ಅವರನ್ನು ಗೌರವದಿಂದ ನಡೆಸಿ ಕೊಂಡಿದ್ದು ಮಾತ್ರವಲ್ಲ ಅವರೊಂದಿಗೆ ವ್ಯವಹಾರವನ್ನೂ ನಡೆಸುತ್ತಿದ್ದರು. ಪವಿತ್ರ ಕುರಾನಿನಲ್ಲಿ ಯಹೂದ್ಯರನ್ನು, ಕ್ರೈಸ್ತರನ್ನೂ, ಸೇಬಿಯನ್ನರನ್ನೂ “ಗ್ರಂಥಗಳ ಸಮುದಾಯ” ಎಂದು ಸಂಬೋಧಿಸಿದ್ದರಿಂದ ಅವರ ಮೇಲೆ unprovoked ಆಕ್ರಮಣ ಮಾಡುವಂತಿಲ್ಲ. ಧರ್ಮ ಯುದ್ಧ ಗಳ ಸಮಯದಲ್ಲಿ ಯಾವುದೇ ಕಾರಣಕ್ಕೂ ಇಗರ್ಜಿ, ಮತ್ತು ಕ್ರೈಸ್ತ ಸಂತರು ವಾಸಿಸುವ ನಿವಾಸಗಳ ಮೇಲೆ ಆಕ್ರಮಣ ಕೂಡದು ಎಂದು ಸ್ಪಷ್ಟವಾಗಿ ಇಸ್ಲಾಮಿನ ಪ್ರಥಮ ಖಲೀಫಾ ಅಬೂ ಬಕ್ಕರ್ ನಿರ್ದೇಶಿಸಿದ್ದರು.

ಇಸ್ಲಾಮಿನ ಎರಡನೇ ಖಲೀಫಾ ಉಮರ್ ಮುಸ್ಲಿಂ ಸೇನೆ ವಶಪಡಿಸಿಕೊಂಡ ಜೆರುಸಲೆಂ ನಗರಕ್ಕೆ ಭೇಟಿ ಕೊಟ್ಟಾಗ ಅಲ್ಲಿನ ಇಗರ್ಜಿಗೆ ಹೋಗಿ ಧರ್ಮಗುರುಗಳನ್ನು ಭೇಟಿಯಾಗುತ್ತಾರೆ. ಸ್ವಲ್ಪ ಹೊತ್ತಿನಲ್ಲೇ ಪ್ರಾರ್ಥನೆಯ ಕರೆ ಕೇಳಿಬರುತ್ತದೆ. ಕೂಡಲೇ ಪಾದ್ರಿ ಉಮರ್ ರವರಿಗೆ ಪ್ರಾರ್ಥಿಸಲೆಂದು ಕಂಬಳಿಯನ್ನು ಇಗರ್ಜಿಯಲ್ಲೇ ಹಾಸುತ್ತಾರೆ. ಸೌಮ್ಯವಾಗಿ ನಿರಾಕರಿಸಿದ ಉಮರ್ ಇಗರ್ಜಿಯಿಂದ ಹೊರಕ್ಕೆ ಸ್ವಲ್ಪ ದೂರ ಹೋಗಿ ನಮಾಜ್ ನಿರ್ವಹಿಸುತ್ತಾರೆ. ಆಗ ಪಾದ್ರಿ ಕೇಳುತ್ತಾರೆ, ಖಲೀಫಾ ಉಮರ್, ಏಕೆ ಇಗರ್ಜಿಯಲ್ಲಿ ನಮಾಜ್ ಮಾಡಕೂಡದು ಎಂದೇನಾದರೂ ಇಸ್ಲಾಮಿನಲ್ಲಿ ಇದೆಯಾ ಎಂದು. ಆಗ ಉಮರ್ ಹೇಳುತ್ತಾರೆ, ಹಾಗೇನಿಲ್ಲ, ಆದರೆ ನಾನು ಇಗರ್ಜಿಯಲ್ಲಿ ನಮಾಜ್ ಮಾಡಿದ ಕಾರಣಕ್ಕೆ ಭವಿಷ್ಯದಲ್ಲಿ ಧರ್ಮದ ತಿರುಳರಿಯದ ಮುಸ್ಲಿಂ ಮತಾಂಧರು ಈ ಇಗರ್ಜಿಯನ್ನೇ ಕೆಡವಿ ಮಸೀದಿ ನಿರ್ಮಿಸಬಹುದು ಎನ್ನುವ ಆತಂಕದಿಂದ ನಾನು ಬಯಲಿನಲ್ಲಿ ನಮಾಜ್ ಮಾಡಿದೆ ಎಂದು ಹೇಳುತ್ತಾರೆ. ಈ ಮಹಾನ್ ಚೇತನ ಆಡಿದ ಇಂಥ ಮಾತಿಗೆ ಸರಿಸಾಟಿಯಾದ ಒಂದೇ ಒಂದು ಮಾತನ್ನು ಚರಿತ್ರೆಯಿಂದ ಹೆಕ್ಕಿ ತೋರಿಸಲು ನಮಗೆ ಸಾಧ್ಯವಾಗದು.

ಸೆಮೆಟಿಕ್ ಧರ್ಮಗಳು ಹಿಂಸೆ ಯನ್ನು ಪ್ರೋತ್ಸಾಹಿಸುತ್ತವೆ ಎಂದು ಹೇಳುವುದು ಅಜ್ಞಾನದ ಕುರುಹು. ಮೇಲಿನ ಪರಧರ್ಮ ಸಹಿಷ್ಣುತೆಯ ಒಂದಲ್ಲ, ಲೆಕ್ಕವಿಲ್ಲದ ಉದಾಹರಣೆಗಳು ಇಸ್ಲಾಮೀ ಚರಿತ್ರೆಯಲ್ಲಿ ನಮಗೆ ಕಾಣಲು ಸಿಗುತ್ತವೆ. ಮುಸ್ಲಿಮರಿಗೆ ಆದರ್ಶ ವ್ಯಕ್ತಿಗಳು ಪ್ರವಾದಿಗಳು, ನಂತರ ಬಂದ ನಾಲ್ಕು ಖಲೀಫಾ ನಾಯಕರುಗಳು, ಪಾಶ್ಚಿಮಾತ್ಯರು ಈಗಲೂ ಕೊಂಡಾಡುವ ಸುಲ್ತಾನ್ ಸಲಾಹುದ್ದೀನ್ ಅಯ್ಯೂಬಿಯಂಥ ಮಹಾ ವ್ಯಕ್ತಿಗಳು. ಇವರಾರೂ ಧರ್ಮ ಬೇರೆ ಎಂದು ಹೇಳಿ ಪರಧರ್ಮೀಯರನ್ನು ನಿಕೃಷ್ಟವಾಗಿ ನಡೆಸಿಕೊಂಡಿಲ್ಲ. ಚರಿತ್ರೆಯಲ್ಲಿ ತಮ್ಮ ಸ್ವಾರ್ಥ, ಅಧಿಕಾರ ಮತ್ತು ಸಾಮ್ರಾಜ್ಯ ವಿಸ್ತರಣೆಗೆ ಬಂದ ದಂಡು ಕೋರರೋ, ಲೂಟಿಕೋರರೋ ಮುಸ್ಲಿಮರಿಗೆ ಆದರ್ಶ ಅಲ್ಲ ಹಾಗೂ ಧರ್ಮ ಸಮ್ಮತವಲ್ಲದ ಕೆಲಸ ಮಾಡಿದ ರಾಜರ ಬಗ್ಗೆ ಮುಸ್ಲಿಮರಿಗೆ ಹೆಮ್ಮೆಯೂ ಇಲ್ಲ.

* ಫೇಸ್ ಬುಕ್ ಮುಸ್ಲಿಂ ವಿರೋಧಿ ?

ನಾಡಿನ ಪ್ರಸಿದ್ಧ ಪತ್ರಿಕೆಯೊಂದರಲ್ಲಿ ಬಂದ ಸುದ್ದಿ ಇದು. ಈಜಿಪ್ಟ್ ದೇಶದ ಮುಸ್ಲಿಂ ಧರ್ಮ ಗುರು ನೀಡಿದ “ಫತ್ವ” ವನ್ನು ತಪ್ಪಾಗಿ  (ಉದ್ದೇಶಪೂರ್ವಕ?) ಅರ್ಥೈಸಿ ಬರೆದಾಗ ಮೇಲೆ ತೋರಿಸಿದ ತಲೆ ಬರಹ ಎಲ್ಲರ ಗಮನ ಸೆಳೆಯುತ್ತದೆ. ಮೈಸೂರು ಪ್ರಕಾಶನದ ಈ ಪತ್ರಿಕೆ ಸಾಧಾರಣವಾಗಿ ಯಾರಿಗೂ ನೋವಾಗದಂಥ, ಅನಾವಶ್ಯಕ ಕುತೂಹಲ ಕೆರಳಿಸದಂಥ ಸುದ್ದಿಗಳನ್ನು ಪ್ರಕಟಿಸುತ್ತದೆ. ಆದರೆ ಕೆಲವೊಮ್ಮೆ “ಫ್ಯಾಷೆನ್ ಟ್ರೆಂಡ್” ಅನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ನೋಡಿ. ಆದರೆ ಇಂಥ ವರದಿಗಳನ್ನು ಮುದ್ರಿಸಿ ಪತ್ರಿಕೆ ತನ್ನ ಆತ್ಮವನ್ನು ಕಳೆದುಕೊಳ್ಳಬಹುದು ಎನ್ನುವ ಸಾಮಾನ್ಯ ಜ್ಞಾನ ಸಂಪಾದಕನಿಗೆ ಇದ್ದರೆ ಆತ ಜಾಗರೂಕತೆ ತೋರಿಸುತ್ತಾನೆ. 

ಈಜಿಪ್ಟ್ ದೇಶದ ಈ ಧರ್ಮ ಗುರು ಫೇಸ್ ಬುಕ್ ಮುಸ್ಲಿಂ ವಿರೋಧಿ ಅಂದ ಕೂಡಲೇ ನಾನಾಗಲಿ, ಲಕ್ಷಾಂತರ ಮುಸ್ಲಿಮರಾಗಲಿ ಫೇಸ್ ಬುಕ್ ನಿಂದ ಹೊರನಡೆಯುವಷ್ಟು ಬಾಲಿಶರಲ್ಲ. ಅಷ್ಟಕ್ಕೂ ಆ ಧರ್ಮ ಗುರು ನೀಡಿದ ವಿವರಣೆ ಸ್ವಲ್ಪ ನೋಡೋಣ. ಫೇಸ್ ಬುಕ್ ಮೂಲಕ ಅನೈತಿಕ ಸಂಬಂಧ ಅರಸಿ ವೈವಾಹಿಕ ಸಂಬಂಧವನ್ನು ಹಾಳುಗೆಡವುವರ ಬಗ್ಗೆ ಮಾತ್ರ ಈ ಎಚ್ಚರಿಕೆ. ಧರ್ಮ ಸಂದೇಶಗಳನ್ನೂ ಸಾರಲೂ, ವ್ಯಾವಹಾರಿಕವಾಗಿಯೋ, ಬರೀ ಸ್ನೇಹಕ್ಕಾಗಿಯೋ ಉಪಯೋಗಿಸುವವರ ವಿರುದ್ಧ ಅಲ್ಲ ಈ  “ಫತ್ವ”. 

ಇಸ್ಲಾಂ ಧರ್ಮದಲ್ಲಿ ಶೋಷಣೆಗೆ ಎಡೆ ಮಾಡುವ ಪುರೋಹಿತಶಾಹಿ ಇಲ್ಲ. ಹಾಗೂ  ಫತ್ವ ಹೊರಡಿಸುವ ಅಧಿಕಾರ ಪ್ರತಿ ಮುಲ್ಲಾಗೂ ಇಲ್ಲ. ಪ್ರಪಂಚದ ಯಾವುದಾದರೂ ಮೂಲೆಯಲ್ಲಿ ಕೂತು ಯಾರಾದರೂ ತಮಗಿಷ್ಟ ಬಂದಂತೆ ಧರ್ಮದ ಬಗ್ಗೆ ಹೇಳಿಕೆ ನೀಡಿದ ಕೂಡಲೇ ಅದನ್ನು ವಿಶೇಷ ವರದಿಯನ್ನಾಗಿ ಪ್ರಕಟಿಸಿ ಬೊಬ್ಬೆ ಹೊಡೆಯುವ ಪತ್ರಿಕೆಗಳಿಗೆ ಮಾಡಲು ಬೇಕಷ್ಟು ಕೆಲಸಗಳಿವೆ. ಸಾಮಾಜಿಕ ಸಂಪರ್ಕ ಮಾಧ್ಯಮಗಳ ಸಂಕೀರ್ಣ ವ್ಯವಸ್ಥೆಗೆ ಬಳಿ ಬಿದ್ದು ತಮ್ಮ ವೈಯಕ್ತಿಕ ಜೀವನವನ್ನು ಹಾಳು  ಮಾಡಿಕೊಂಡವರು ಹಲವರು. ವಿವಾಹಿತರಾಗಿಯೂ ಸಂಬಂಧಗಳನ್ನು ಹುಡುಕಿಕೊಂಡು ನಡೆಯುವ, ಸುಳ್ಳು ಪ್ರೊಫೈಲ್ ಗಳನ್ನು ನಂಬಿ ತಮ್ಮ ಬದುಕನ್ನು ಕೆಡಿಸಿ ಕೊಂಡವರೂ ಇದ್ದಾರೆ. ಟೀವೀ ಬಂದ ಹೊಸತರಲ್ಲೂ ಕೆಲವು ಧರ್ಮ ಗುರುಗಳು ಈ “ಶನಿ ಪೆಟ್ಟಿಗೆ” ಸಮಾಜವನ್ನು ಕಲುಷಿತಗೊಳಿಸಬಹುದು ಎಂದು ಎಚ್ಚರಿಸಿದ್ದರು. ಹಾಗೆ ಸಂಭವಿಸಿತೂ ಕೂಡಾ. ೮ – ೧೦ ವರ್ಷದ ಮಕ್ಕಳು ಅಶ್ಲೀಲ ಸೀರ್ಯಲ್ಲುಗಳನ್ನು, ಮೂವಿಗಳನ್ನು ನೋಡಿ ಪ್ರೇಮ ಪತ್ರ ಬರೆಯಲು ತೊಡಗಿದರು.  ಹದಿಹರೆಯದ ಹೊತ್ತಿಗೆ ಎಲ್ಲ ರೀತಿಯ ಅನುಭವಗಳನ್ನು ಪಡೆಯಲು ತೊಡಗಿದರು. ಹಿಂಸಾಪ್ರಿಯರೂ ಆದರು. 

ಹಾಗೆಂದು ತಂತ್ರ ಜ್ಞಾನಕ್ಕೆ ಬೆನ್ನು ತಿರುಗಿಸಿ ಬದುಕಬೇಕೆಂದಲ್ಲ. ಮಿತಿಯನ್ನು ಅರಿತು ಪ್ರಜ್ಞಾ ಶೀಲತೆ ಮೆರೆದರೆ ಅದೇ ಚೆಂದ.          

 

 

ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ…

ಭಾರತ ವಿಶ್ವದ ಅತ್ಯಂತ ಭ್ರಷ್ಟ ರಾಷ್ಟ್ರಗಳಲ್ಲೊಂದು. ಹೇಗಿದೆ, ನಮ್ಮ ಕೀರ್ತಿಯ ಪತಾಕೆ. ಬಹು ಎತ್ತರಕ್ಕೆ ಹಾರುತ್ತಿದೆ ಅಲ್ಲವೇ? ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ… ಅಂತರರಾಷ್ಟ್ರೀಯ ಪಾರದರ್ಶಕ ಸಂಸ್ಥೆ ಈ ಬಹುಮಾನವನ್ನು ಭಾರತಕ್ಕೂ ಮತ್ತು ಇತರ ರಾಷ್ಟ್ರಗಳಿಗೂ ದಯಪಾಲಿಸಿತು. ಸಮಾಧಾನ ಏನೆಂದರೆ ನಮ್ಮೊಂದಿಗೆ ಒಂದಿಷ್ಟು ಸಂಗಾತಿಗಳೂ ಇರುವುದು; ಸೋಮಾಲಿಯ, ಆಫ್ಘಾನಿಸ್ತಾನ, ಮಯನ್ಮಾರ್, ಸುಡಾನ್ ಮತ್ತು ಇರಾಕ್. ವಾಹ್! ಸ್ನೇಹಿತರ ಪ್ರೊಫೈಲ್ ಒಮ್ಮೆ ಸ್ವಲ್ಪ ನೋಡಿ. ೧೮೦ ರಾಷ್ಟ್ರಗಳ ಪೈಕಿ ನಮ್ಮ ರಾಂಕಿಂಗ್ ೮೪. ಲಂಚ ಎಂದ ಕೂಡಲೇ ಹೆಣವೂ ಬಾಯಿ ಬಿಡುತ್ತಂತೆ. ಬಿಟ್ಟಿ ದುಡ್ಡು ನೋಡಿ.. ದುಡಿಮೆ ಬೇಡ, ಬೆವರಿನ ಅಗತ್ಯವಿಲ್ಲ… ಮಾಡಲೇಬೇಕಾದ ಕೆಲಸವನ್ನು ಮಾಡಿ ಕೊಡಲಾರೆ ಎಂದು ೧೦೧ ಕಾರಣಗಳನ್ನು ನೀಡಿ ನಂತರ ಸ್ವಲ್ಪ ಕೊಳಕಾದ ಹಲ್ಲುಗಳನ್ನು ಪ್ರದರ್ಶಿಸಿದರೆ ಬಂದು ಬೀಳುತ್ತದೆ ಕಾಂಚಾಣ. ಕಾಂಚಾಣಂ ಕಾರ್ಯ ಸಿದ್ಧಿ. ಮತ್ತೆ ಧಾರ್ಮಿಕತೆಯನ್ನು ಪ್ರದರ್ಶಿಸಿ ಮುಖವಾದ ಹಾಕಿಕೊಂಡು ಓಡಾಡೋದು? ಅದಕ್ಕೇನು ದಾರಿಯಲ್ಲಿ ಸಿಗುವ ದೇವರ ಹುಂಡಿಗಳಿಗೋ ನಮ್ಮ ಇಷ್ಟದೇವರುಗಳ ಮಠಗಳಿಗೋ ಒಂದಿಷ್ಟು ಸುರಿದು ಬಂದರಾತು. ಲಂಚ ತೆಗೆದುಕೊಳ್ಳಬೇಡಿ ಎಂದು ಯಾವ ಧರ್ಮಭೀರುವಿನ ಬಾಯಿಂದಲೂ ಬರುವುದಿಲ್ಲ ನೋಡಿ, ಏಕೆಂದರೆ ಆ ಮೂಲದ ಮೂಲಕವೇ ಅಲ್ಲವೇ ಅವರ ಹೊಟ್ಟೆಪಾಡು ಸಾಗುವುದು? ಯಾರಾದರೂ ಕೊಡಲಿಯನ್ನು ತಮ್ಮ ಕಾಲ ಮೇಲೆಯೇ ಹಾಕಿಕೊಳ್ಳುತ್ತಾರ? ಇಂಥ ಸಾಮಾಜಿಕ ಅನಿಷ್ಟಗಳನ್ನು ಹೋಗಲಾಡಿಸುವತ್ತ ಗಮನ ಹರಿಸುವುದನ್ನು ಬಿಟ್ಟು ರಾಷ್ಟ್ರ ಭಾಷೆ ಯಾವುದಾಗಬೇಕು, ರಾಷ್ಟ್ರ ಗೀತೆ ಇದಾದರೇನು ಅಥವಾ ಇನ್ನಾವುದಾದರೂ ಹೊಸ ಸಮಸ್ಯೆಯನ್ನು ingenuity ಉಪಯೋಗಿಸಿ ಹುಟ್ಟುಹಾಕಿ ಜನರ ಪೀಡಿಸುವುದು, ಈ ತೆರನಾದ ವ್ಯರ್ಥ ಕಾರ್ಯಗಳಲ್ಲಿ ನಾವು ನಮ್ಮನ್ನು ತೊಡಗಿಸಿಕೊಂಡು ವಿಶ್ವದ ಎದುರಿಗೆ ನಮ್ಮ ಮಾನ ನಾವೇ ಹರಾಜಿಗೆ ಹಾಕಿಕೊಳ್ಳುತ್ತೇವೆ.

ವರದಕ್ಷಿಣೆ

ವರದಕ್ಷಿಣೆ ಒಂದು ಸಾಮಾಜಿಕ ಅನಿಷ್ಟ. ಇದು ಅದನ್ನು ಪಡೆಯುವವನಿಗೂ ಗೊತ್ತು. ಆದ್ರೇನು ಮಾಡೋದು ಪುಕ್ಕಟೆ ಸಿಗುವ ಹಣ ಅಲ್ಲವೇ, ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ. ಈ ವಿಷಯದಲ್ಲಿ ಎಲ್ಲಾ ಧರ್ಮೀಯರೂ ಸಮಾನರು. ಇಲ್ಲಿ ಮಾತ್ರ  ಸಮಾನತೆ ವಿಜ್ರಂಭಿಸುತ್ತದೆ. ಗಂಡಿಗೆ ಲಾಭ ಆಗುವ ಸಮಾನತೆ. ಜಮಾತೆ ಇಸ್ಲಾಮಿನವರು ( ಮುಸ್ಲಿಂ ಸಾಮಾಜಿಕ ಸಂಘಟನೆ ) ಒಂದು ಅಭಿಯಾನ ಆರಂಭಿಸಿದರು. ವರದಕ್ಷಿಣೆ ಪುರುಷ ವೇಶ್ಯಾವಾಟಿಕೆಗೆ ಸಮಾನ ಎಂದು. ಎಲ್ಲ ಧರ್ಮಗಳ ಸುಧಾರಕರು ಈ ಅನಿಷ್ಟದ ವಿರುದ್ಧ ಕೂಗೆತ್ತಿದರು. ಫಲ ಅಷ್ಟಕ್ಕಷ್ಟೇ.

 ಸರಿ ಅಷ್ಟೆಲ್ಲಾ ಕೊಟ್ಟು ಮದುವೆಯಾಗುವ ಹೆಣ್ಣಿಗೆ ಸಿಗುವುದು ಏನು? ವಿವಾಹಿತೆ ಅನ್ನೋ ಕಿರೀಟ. ಮದುವೆಯಾದ ಕೂಡಲೇ ತನ್ನ ತಂದೆಯ ಹೆಸರಿನಿಂದ ಗುರುತಿಸಲ್ಪಡುವುದಿಲ್ಲ. ಬದಲಿಗೆ ಇಂಥಹ ಮಹಾತ್ಮನ ಪತ್ನಿ ಎಂದು ಗುರುತಿಸುತ್ತಾರೆ ಜನ. ಅವಳ ವೇಷ ಭೂಷಣಗಳಲ್ಲೂ ಬದಲಾವಣೆ. ಒಂದಿಷ್ಟು ಹೆಚ್ಚುವರಿ ಉಡುಗೆ. ತಾಳಿಯಿಂದ ಹಿಡಿದು ಕಾಳುನ್ಗುರದವರೆಗೆ  ಗಂಡನ ಅಸ್ತಿತ್ವ, ಪಾರುಪತ್ಯ ಸಾರಿ ತೋರಿಸುವ ಕುರುಹುಗಳು. ಈ ತ್ಯಾಗ ಹೆಣ್ಣಿನ ತಂದೆ ಸಾಲ ಸೋಲ ಮಾಡಿಯೋ, ಜೀವನ ಪೂರ್ತಿ ಉಳಿಸಿದ ಹಣ ತೆತ್ತೋ ಕೊಟ್ಟ ಕಪ್ಪ ಕಾಣಿಕೆ. ಅಷ್ಟೇ ಅಲ್ಲ, ವರದಕ್ಷಿಣೆ ಕೊಟ್ಟರಷ್ಟೇ ಸಾಲದು. ನೆರೆದ ನೂರಾರು ಜನರ ಮುಂದೆ ಇವನ ಪಾದಾರವಿನ್ದಗಳನ್ನು ಅತ್ತೆ ಮಾವ ತೊಳೆಯಬೇಕು. ಬೆಳ್ಳಿ ಬಟ್ಟಲಿನಲ್ಲೇ ತೀರ್ಥ ಕುಡಿಸಬೇಕು ಕಪ್ಪ ಕಾಣಿಕೆ ಪಡೆದ ದಣಿದ ದೇಹಕ್ಕೆ. ಬೆಳ್ಳಿ ಲೋಟ ಇಲ್ಲವೊ ಮಾವ ಕೊಟ್ಟ ವರದಕ್ಷಿಣೆಯ ಸ್ಕೂಟರಿನಲ್ಲೇ ಜಾಗ ಖಾಲಿ ಮಾಡುತ್ತಾನೆ.

 ಒಮ್ಮೆ ಇಂಥ ಒಂದು ಸಂತೆಗೆ ಹೋಗುವ ಭಾಗ್ಯ ನನ್ನದು. ಮದುವೆಗೆ ಮುಂಚೆ ನಡೆಯುವ ಚೊಕಾಸಿ ವ್ಯಾಪಾರ ಕಂಡು ಹೇಸಿಗೆ ಆಯಿತು. ಜನ ಯಾವ ಮಟ್ಟಕ್ಕೆ ಇಳಿಯುವರು ಹಣದ ಆಸೆಯಲ್ಲಿ ಎಂದು ಅಚ್ಚರಿ ಪಟ್ಟೆ. ಕೋಲೆ ಬಸವನಂತೆ ಭಾವಿ ಮಾವನೆದುರು ತನ್ನ ತಂದೆ  ಶಾಪಿಂಗ್ ಲಿಸ್ಟ್ ಓದುವುದನ್ನು ಜೊಳ್ಳು  ಸುರಿಸುತ್ತಾ ನೋಡುವ ಗಂಡಿಗೆ ಎಕ್ಕಡ ಸೇವೆ ಮಾಡುವ ಮನಸ್ಸಾದರೂ ಭಯದಿಂದ ಸುಮ್ಮನಾಗುತ್ತೇನೆ. ಈ ಕುದುರೆ ವ್ಯಾಪಾರ ನಮ್ಮ ಮೌಲ್ವಿಗಳ ಎದುರಿನಲ್ಲಿ ನಡೆಯುವುದು  ಮತ್ತೊಂದು ರೀತಿಯ ಅವಮಾನ.

 ಇಸ್ಲಾಮಿನಲ್ಲಿ ವರದಕ್ಷಿಣೆ ಇಲ್ಲ. ಬೂಟಾಟಿಕೆ ಬಹಳಷ್ಟಿದೆ.  ಗಂಡು ವಧು ದಕ್ಷಿಣೆ ಕೊಡಬೇಕು. ಓಕೆ, ವೈ ನಾಟ್? ನೆರೆದವರ  ಮುಂದೆ ಕವಡೆ ಬಿಸಾಕಿ ಹಿಂದಿನ ಬಾಗಿಲಿನಿಂದ ಲಾರಿಗಟ್ಟಲೆ ಸಾಮಾನು, ನಾಗ ನಾಣ್ಯ ಲೂಟಿ. ದುಡ್ಡಿನ ಮುಂದೆ ಆದರ್ಶಗಳು ಆಲಸ್ಯದಿಂದ ಆಕಳಿಸುತ್ತವೆ.   

 ತೀರ ಗತಿಕೆಟ್ಟ ಕುಟುಂಬದವರಿಂದಲೂ   ಹಣ ಬಯಸುವ ಗಂಡು ಅದ್ಹೇಗೆ ತಾನು ಗಂಡು ಎಂದು ಹೆಮ್ಮೆಯಿಂದ ಎದೆಯುಬ್ಬಿಸಿ ನಡೆಯುತ್ತಾನೋ? ದರೋಡೆಕೋರನಿಗೆ ಕರುಣೆ ಎಲ್ಲಿಂದ ಅಲ್ಲವೇ? ಶ್ರೀಮಂತನ ಮನೆಯಾದರೂ ಸರಿ ದರಿದ್ರದವನ ಮನೆಯಾದರೂ ಸರಿ ತನಗೆ ಬೇಕಿದ್ದು ಸಿಗುವಾಗ ತಾರತಮ್ಯವೇಕೆ?   

 ಗಂಡಾಗಿ ಹುಟ್ಟುವುದೇ ಒಂದು ಕ್ವಾಲಿಫಿಕೇಶನ್ ಕೆಲವರಿಗೆ. ಈ ಕ್ವಾಲಿಫಿಕೇಶನ್ ಇಟ್ಟುಕೊಂಡು ಅವನು ಕೊಡುವ ಸರ್ವಿಸ್ ಗೊತ್ತೇ ಇದೆಯಲ್ಲ?