ಕನ್ನಡ ಪುಸ್ತಕಗಳ ಪ್ರದರ್ಶನ

ಮಂಗಳೂರಿನಲ್ಲಿ ಇತ್ತೀಚೆಗೆ ಕನ್ನಡ ಪುಸ್ತಕಗಳ ಭಾರೀ ಪ್ರದರ್ಶನ ಏರ್ಪಟ್ಟಿತ್ತು. ಕನ್ಫ್ಯೂಸ್ ಮಾಡ್ಕೋಬೇಡಿ, ಭಾರೀ ಎಂದರೆ ಭಾರೀ ತಯಾರಿ ಮತ್ತು ಉತ್ಸಾಹ ಎಂದು. ಭಾರೀ ಯಶಸ್ಸಲ್ಲ. ಓದಿನ ಕಡೆ ಜನರ ಧೋರಣೆ ಏನು ಎಂದು ಖಾಲಿಯಾಗಿ ಭಣಗುಟ್ಟುತ್ತಿದ್ದ ಗಲ್ಲಾ ಪೆಟ್ಟಿಗೆಗಳೇ ಸಾಕ್ಷಿಯಾದವು. ನೆಹರೂ ಮೈದಾನದ ಮೂಲಕ ಹಾದು ಹೋಗುತ್ತಿದ್ದಾಗ ನನ್ನ ಭಾವನವರ ಕಣ್ಣಿಗೆ ಬಿತ್ತು ಪುಸ್ತಕ ಪ್ರದರ್ಶನ. ಕೂಡಲೇ ಅಲ್ಲಿಂದಲೇ ನನಗೆ ಫೋನಾಯಿಸಿ ಬನ್ನಿ, ನಿಮಗಿಷ್ಟವಾದ ಒಂದು ಪ್ರದರ್ಶನ ಏರ್ಪಟ್ಟಿದೆ ಎಂದು ಆಮಂತ್ರಿಸಿದ್ದೆ ತಡ ಅಲ್ಲಿಗೆ ದೌಡಾಯಿಸಿದೆ. ಸೊಗಸಾದ ವಿಶಾಲವಾದ ಸಾಲಕೃತ ಮಂಟಪದಲ್ಲಿ ಡಜನು ಗಟ್ಟಲೆ ಪ್ರಕಾಶಕರು ವಿದ್ಯಾ ದೇವತೆಯನ್ನು ಅಲಂಕರಿಸಿ ಕರೆದು ಕೊಂಡು ಬಂದಿದ್ದರು ನಾಡಿನ ಮೂಲೆ ಮೂಲೆಯಿಂದ. ತಮಿಳು ಚಿತ್ರ ರಜನಿ ನಟಿಸಿದ ಎನ್ಧಿರನ್ ನೋಡಲೆಂದು ಸೇರಿದ್ದ ಜನ ಜಮಾವಣೆ ಇರಬಹುದೆಂದು ಊಹಿಸಿ ಬಂದಿದ್ದ ನನಗೆ ನಿರಾಶೆ. ಸಾರ್ವಜನಿಕರಿಗಿಂತ ಹೆಚ್ಚಾಗಿ ಅಲ್ಲಿನ ಸಿಬ್ಬಂದಿಗಳೇ ತುಂಬಿದ್ದರು. ಒಂದೇ ಸೂರಿನಡಿ ಅಷ್ಟೊಂದು ಪುಸ್ತಕಗಳನ್ನು ಖುಷಿ ಯಿಂದ ನೋಡುತ್ತಾ ಒಂದೊಂದೇ ಮಳಿಗೆ ಕಡೆ ಕಣ್ಣು ಹಾಯಿಸುತ್ತಾ ಬೆಳಗೆರೆ ಕೃಷ್ಣ ಶಾಸ್ತ್ರಿಗಳ “ಮರೆಯಲಾದೀತೇ”, “ಸಾಹಿತಿಗಳ ಸ್ಮೃತಿ”, ಫಾಕೀರ್ ಮುಹಮ್ಮದ್ ಕಟ್ಪಾಡಿ ಯವರ “ಸೂಫಿ ಸಂತರು”, S.M. ಮುಶ್ರಿಫ್ ರವರ ಕನ್ನಡ ಅನುವಾದಿತ “ಕರ್ಕರೆಯನ್ನು ಕೊಂದವರು ಯಾರು”, ವೆಂಕಟ ಸುಬ್ಬಯ್ಯ ಅವರ “ಇಗೋ ಕನ್ನಡ”… ಮತ್ತು ಇನ್ನೂ ಕೆಲವು ಪುಸ್ತಕಗಳನ್ನೂ ಖರೀದಿಸಿ ಮರಳಿದೆ. ಹಿಂದೊಮ್ಮೆ ಸಂಪದದಲ್ಲೇ ಕರಾವಳಿಯಲ್ಲಿ ಕನ್ನಡಕ್ಕಿರುವ ಪ್ರಾಶಸ್ತ್ಯದ ಬಗ್ಗೆ ಬರೆದದ್ದಕ್ಕೆ ಅರಬ್ಬೀ ಸಮುದ್ರದ ಅಲೆಗಳಂತೆ ನನ್ನ ಮೇಲೆ ಕೆಲವರು ಹಾಯ್ದಿದ್ದರು. ಆ ಪ್ರದೇಶದಲ್ಲಿ ಕನ್ನಡ ಬಳಕೆ, ಅಷ್ಟಕ್ಕಷ್ಟೇ ಎಂದರೆ ಅದು ಒಂದು ದೂಷಣೆ ಯಾಗಿ ಮಾರ್ಪಡಬಾರದು. ಅಲ್ಲಿನ ಜನರಿಗೆ ಕೊಂಕಣಿ, ತುಳು ಭಾಷೆಗಳೊಂದಿಗೆ ನಂಟು ಹೆಚ್ಚು. ಹಾಗೆಂದು ಕನ್ನಡ ಬಗ್ಗೆ ಅಸಡ್ಡೆ ಇದೆಯೆಂದಲ್ಲ. ಆದರೆ ಈ ಪ್ರದರ್ಶನಕ್ಕೆ ಜನರ ಪ್ರತಿಕ್ರಿಯೆ ಮತ್ತು ಪ್ರಕಾಶಕರ ಅಳಲು ನೋಡಿದರೆ ಓದುಗರ ಸಂಖ್ಯೆ ದಿನೇ ದಿನೇ ಇಳಿ ಮುಖವಾಗುತ್ತಿದೆ ಎಂದೆನ್ನಿಸದಿರಲಾರದು. ಓದುಗ ಸಮೂಹ ಪುಸ್ತಕಗಳನ್ನ ಖರೀದಿ ಮಾಡಿ, ಹಲ್ಲು ಗಿಂಜುತ್ತಾ ಇನ್ನಷ್ಟು ಡಿಸ್ಕೌಂಟ್ ಕೊಡು ಎಂದು ಕೇಳೋದು, ಸಿನೆಮಾ ಟಿಕೆಟ್ಗಾದರೆ ಎಷ್ಟನ್ನಾದರೂ ಕೊಟ್ಟು ಬ್ಲಾಕ್ ಮಾರ್ಕೆಟ್ ನಲ್ಲಿ ಟಿಕೆಟ್ ಕೊಳ್ಳಲು ತಯಾರಾಗೋದು ನೋಡಿದಾಗ ಕನಿಕರ ತೋರದಿರದು. ಕನ್ನಡ ಪುಸ್ತಕಗಳ ಮಾರಾಟದ ಕಾರ್ಮೋಡದ ಪರಿಸ್ಥಿತಿಯಲ್ಲೂ ಒಂದು ಹೊಂಗಿರಣ ಏನೆಂದರೆ ಕನ್ನಡ ಪ್ರಕಾಶನ ಈಗ ಮೊದಲಿನಂತಲ್ಲ ಎನ್ನುವ ಸೂಚನೆ ಸಿಕ್ಕಿದ್ದು. ಮುದ್ರಣ, ಮುಖಪುಟದ ವಿನ್ಯಾಸ ಹೀಗೆ ಹಲವು ಪ್ರಾಕಾರಗಳಲ್ಲಿ ಸ್ವಾಗಾತಾರ್ಹ ಮತ್ತು ಪ್ರಶಂಸಾರ್ಹ ಸುಧಾರಣೆ ಕಂಡಿದೆ ಕನ್ನಡ ಪ್ರಕಾಶನ. ಆದರೆ ದುರದೃಷ್ಟವಶಾತ್ ಈ ಮಾತನ್ನು ಮೈಸೂರು ವಿಶ್ವ ವಿದ್ಯಾಲಯದ ಪ್ರಕಾಶನದ ಬಗ್ಗೆ ಹೇಳಲು ಬರುವುದಿಲ್ಲ. ಸರಕಾರೀ ಕೆಲಸದ ಹಾಗೆಯೇ ಒಂದು ನೀರಸ, ನಿಸ್ತೇಜ, ದಯನೀಯ ಪುಸ್ತಕಗಳು. ದಿನೇ ದಿನೇ ಅತ್ಯಾಧುನಿಕ ಮಾಲುಗಳ ಸಂಖ್ಯೆ, ಹೊಸ ಹೊಸ ಅಂತಾರಾಷ್ಟ್ರೀಯ ಬ್ರಾಂಡುಗಳ ಆಗಮನ ಮಂಗಳೂರಿನ ಜನರ ಕೊಳ್ಳುವ ಸಾಮಾರ್ಥ್ಯದ ಕಡೆ ಬೆಟ್ಟು ಮಾಡಿದರೆ ಮತ್ತೊಂದೆಡೆ ವೈಚಾರಿಕ ದಾರಿದ್ರ್ಯ ತನ್ನ ಕುತ್ತಿಗೆಯನ್ನು ನೀಳವಾಗಿಸುತ್ತಿರುವ ದೃಶ್ಯ ಮಂಗಳೂರಿಗೆ ಮಾತ್ರ ಸೀಮಿತ ಅಲ್ಲ ಎನ್ನುವುದನ್ನು ಸಾಕಷ್ಟು ಸುತ್ತಾಡಿದ ಜನರಿಗೆ ಮನವರಿಕೆ ಆಗಿರಲಿಕ್ಕೂ ಸಾಕು.

ವ್ರತಾಚರಣೆಯ ಮಾಸ

ರಮದಾನ್, (ರಂಜಾನ್ ಎಂದೂ ಕರೆಯಲ್ಪಡುತ್ತದೆ, ramzan) ಇಸ್ಲಾಮೀ ಪಂಚಾಂಗದ ಒಂಭತ್ತನೆ ತಿಂಗಳು ಮತ್ತು ಇಸ್ಲಾಮಿನ ಐದು ಸ್ಥಂಭಗಳಲ್ಲಿ ಮೂರನೆಯ ಸ್ಥಂಭವಾದ ರಮದಾನ್ ತಿಂಗಳಿನಲ್ಲಿ ಜಗತ್ತಿನ ಮುಸ್ಲಿಮರು ದಿನವಿಡೀ ಉಪವಾಸವಿದ್ದು ವಿಶೇಷ ಆರಾಧನೆಯಲ್ಲೂ, ಪವಿತ್ರ ಕುರಾನ್ ಪಾರಾಯಣದಲ್ಲೂ ತಮ್ಮ ಸಮಯ ಕಳೆಯುತ್ತಾರೆ. ಈ ಕಾರಣಕ್ಕಾಗಿ ಈ ಮಾಸವನ್ನು ದಾನದ, ಧ್ಯಾನದ ಮತ್ತು ಚಿಂತನೆಯ ಮಾಸವೆಂದು ಕರೆಯುತ್ತಾರೆ (month of charity, contemplation, and reflection). ಚಂದ್ರ ದರ್ಶನದೊಂದಿಗೆ ಆರಂಭವಾಗುವ ೩೦ ದಿನಗಳ ಈ ಉಪವಾಸ ವ್ರತ ಮುಸ್ಲಿಮ್ ಜಗತ್ತಿಗೆ ಹೊಸ ಚೈತನ್ಯವನ್ನೂ, ಧಾರ್ಮಿಕತೆಯನ್ನೂ ತುಂಬುತ್ತದೆ.

ನಮ್ಮನ್ನು ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸುವುದಕ್ಕೆ, ಪ್ರಾಮುಖ್ಯತೆ ಹೆಚ್ಚು. ಯಾವುದೇ ಪರಿಸ್ಥಿತಿಯಲ್ಲೂ ಐದು ಹೊತ್ತಿನ ನಮಾಜನ್ನು ನಿರ್ವಹಿಸಲೇಬೇಕು. ನಮಾಜ್ ಜೊತೆಗೆ ಕುರಾನ್ ಸೂಕ್ತಗಳನ್ನು ಪಠಿಸುವುದು, ಹಜ್ ಯಾತ್ರೆ, ಇವೂ ಸಹ ಆರಾಧನೆಯಲ್ಲೇ ಒಳಗೊಳ್ಳುತ್ತದೆ. ಆದರೆ ನಮಾಜ್, ಕುರಾನ್ ಪಠಣ, ಹಜ್ ಇತ್ಯಾದಿಗಳು  ತೋರಿಕೆಯ ಆರಾಧನೆಯಾಗಿಯೂ ಮಾರ್ಪಡಬಹುದು. ನಾನು ಧರ್ಮಿಷ್ಠ ಎಂದು ತೋರಿಸಲು ಎಲ್ಲರಿಗೂ ಕಾಣುವಂತೆ ಮಸ್ಜಿದ್ ಗೆ ಹೋಗುವುದು, ಹಜ್ ಯಾತ್ರೆ ಮಾಡುವುದು ಹೀಗೆ. ಆದರೆ ವ್ರತಾಚಾರಣೆ ಹಾಗಲ್ಲ. ಇದೊಂದು ರಹಸ್ಯ ಆರಾಧನೆ. ಉಪವಾಸವಿರುವವನ ಮತ್ತು ಅವನ ಪ್ರಭುವಿಗೆ ಮಾತ್ರ ತಿಳಿಯುವ ಆರಾಧನೆ. ಮೂರನೆಯ ವ್ಯಕ್ತಿಗೆ ಇದರ ಅರಿವಿರುವುದಿಲ್ಲ; ಹಾಗಾಗಿ ವ್ರತಾಚರಣೆಗೆ ಹೆಚ್ಚು ಮಹತ್ವ.    

ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದವರೆಗೆ ಉಪವಾಸದ ಅವಧಿ. ಅರುಣೋದಯದ “ಪ್ರಾರ್ಥನೆಯ ಕರೆ” ( “ಅದಾನ್” ) ಕಿವಿಗೆ ಬಿದ್ದ ಕೂಡಲೇ ಆಹಾರ, ಪಾನೀಯಗಳು ನಿಷಿದ್ಧವಾಗುತ್ತವೆ. ಅದೇ ರೀತಿ ಸೂರ್ಯಾಸ್ತದ ಪ್ರಾರ್ಥನೆಯ ಕರೆ ಕೇಳಿದ ಕೂಡಲೇ ಸ್ವಲ್ಪ ನೀರು ಮತ್ತು ಖರ್ಜೂರದ ಸಹಾಯದಿಂದ ಉಪವಾಸವನ್ನು ಕೊನೆಗೊಳಿಸಲಾಗುತ್ತದೆ. ಇಡೀ ದಿನದ ಉಪವಾಸದಿಂದ ಶರೀರದ ಮೇಲೆ ಹೆಚ್ಚು ವ್ಯತಿರಿಕ್ತ ಪರಿಣಾಮ ಆಗಬಾರದು ಎಂದು ಮಧ್ಯ ರಾತ್ರಿಯ ನಂತರ ಅಥವಾ ಅರುಣೋದಯದ ಸ್ವಲ್ಪ ಮೊದಲು ಸ್ವಲ್ಪವಾದರೂ ಆಹಾರ (ಇದಕ್ಕೆ “ಸುಹೂರ್” ಎಂದು ಕರೆಯುತ್ತಾರೆ) ತೆಗೆದು ಕೊಳ್ಳಲೇಬೇಕು. ಅದೇ ರೀತಿ ದಿನವಿಡೀ ಒಂದು ತೊಟ್ಟೂ ನೀರಿಲ್ಲದೆ, ತಮ್ಮ ದಿನಚರಿಗೆ ಯಾವುದೇ ಧಕ್ಕೆ ಬಾರದಂತೆ ತಮ್ಮ ಕೆಲಸ, ಧಂಧೆ ಮಾಡುತ್ತಾ ಉಪವಾಸವಿದ್ದು ಸೂರ್ಯಾಸ್ತಕ್ಕೆ ಒಂದು ಗುಟುಕು ನೀರು ಮತ್ತು ಒಂದು ತುಂಡು ಖರ್ಜೂರದ ಸಹಾಯದಿಂದ ಉಪವಾಸ ಕೊನೆಗೊಳಿಸುವುದಕ್ಕೆ  “ಇಫ್ತಾರ್” ಎಂದು ಕರೆಯುತ್ತಾರೆ. ಇಫ್ತಾರ್ ಪದವನ್ನು ತಾವು ಕೇಳಿರಲೇಬೇಕು, ನಮ್ಮ ರಾಜಕಾರಣಿಗಳು ಮುಸ್ಲಿಂ ಗೆಳೆಯರಿಗೆ ಏರ್ಪಡಿಸುವ ಔತಣ. ಪ್ರಾಯಕ್ಕೆ ಬಂದ ಪ್ರತೀ ಮುಸ್ಲಿಮ್ ಉಪವಾಸ ವ್ರತ ಆಚರಿಸಲೇಬೇಕು ಎಂದು ಕಡ್ಡಾಯವಾದ ನಿಯಮ. ಖಾಯಿಲೆಯಿಂದ ಬಳಲುವವರಿಗೆ ಮತ್ತು ಯಾತ್ರಿಗಳಿಗೆ ಇದರಿಂದ ವಿನಾಯಿತಿ ಇದ್ದು ಯಾತ್ರೆ ಮುಗಿದ ನಂತರ, ಮತ್ತು ಖಾಯಿಲೆಯಿಂದ ಗುಣಮಮುಖರಾದ ನಂತರ ತಪ್ಪಿಹೋದ ಉಪವಾಸ ದಿನಗಳನ್ನು ಉಪವಾಸ ಇರುವ ಮೂಲಕ ತೀರಿಸಬೇಕು,ಅದೂ ಸಾಧ್ಯವಾಗದಿದ್ದರೆ ತಪ್ಪಿ ಹೋದ ದಿನಗಳಿಗೆ ಪ್ರಾಯಶ್ಚಿತ್ತವಾಗಿ ಬಡ ಬಗ್ಗರಿಗೆ ಅನ್ನದಾನ ಮಾಡಬೇಕು.

ರಮದಾನ್ ಮಾಸದ ಮಹತ್ವದ ಬಗ್ಗೆ ಹೇಳುತ್ತಾ ಪ್ರವಾದಿಗಳು ಹೇಳಿದ್ದು, ರಮದಾನ್ ಮಾಸ ೭೦,೦೦೦ ತಿಂಗಳು ಗಳಿಗೆ ಸಮಾನ ಎಂದು. ಅದೂ ಅಲ್ಲದೆ ಇದೇ ತಿಂಗಳಿನಲ್ಲಿ ಪವಿತ್ರ ಕುರಾನ್ ನ ಸೂಕ್ತಗಳು ಅವತೀರ್ಣವಾಗಿದ್ದು.  ಈ ಕಾರಣಕ್ಕಾಗಿ ಜಗದಾದ್ಯಂತ ಮುಸ್ಲಿಮರು ಈ ತಿಂಗಳ ತಮ್ಮ ಬಿಡುವಿನ ವೇಳೆಯಲ್ಲಿ ಮತ್ತು ಹೆಚ್ಚು ಸಮಯ ಕುರಾನ್ ಪಾರಾಯಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಹಾಗೆಯೆ ಈ ತಿಂಗಳಿನಲ್ಲಿ ರಾತ್ರಿಯಲ್ಲಿ “ತರಾವೀಹ್” ಎಂದು ಕರೆಯಲ್ಪಡುವ ವಿಶೇಷ ಪ್ರಾರ್ಥನೆಗಳು ಸಹ ನಡೆಯುತ್ತವೆ. ಪ್ರತೀ ಆರಾಧನೆ, ದಾನ, ಒಳ್ಳೆಯ ಮಾತು, ಕೃತಿ ಇವುಗಳಿಗೆ ಪ್ರತಿಫಲ ಸಹ ೭೦,೦೦೦ ಪ್ರತಿಫಲದ ರೀತಿಯಲ್ಲಿ ದೇವರು ಕೊಡುವನೆಂದೂ ಮುಸ್ಲಿಮ್ ವಿಧ್ವಾಂಸರು ಹೇಳುತ್ತಾರೆ.      

ರಮದಾನ್ ತಿಂಗಳಿನಲ್ಲಿ ನಾವು ಮಾಡುವ ಪ್ರತೀ ಕೆಲಸವೂ ಇಸ್ಲಾಮೀ ಆದರ್ಶಗಳಿಗೆ ಪೂರಕವಾಗಿರಬೇಕೆಂದು ವಿಧ್ವಾಂಸರುಗಳು ಎಚ್ಚರಿಸುತ್ತಾರೆ. ಈ ಮಾಸದಲ್ಲಿ ಉದ್ರೇಕ ಪಡುವುದಾಗಲೀ,ಕೆರಳುವುದಾಗಲೀ ಮಾಡಬಾರದು. ಹಾಗೇನಾದರೂ ಯಾರಾದರೂ ಉದ್ರೇಕಿಸಿದರೆ “ನಾನು ವ್ರತಾಚರಣೆ ಮಾಡುತ್ತಿದ್ದೇನೆ” ಎಂದು ಹೇಳಿ ಮೌನವಾಗಿರಬೇಕು ಎಂದು ಸಲಹೆ ನೀಡುತ್ತಾರೆ. ಜ್ಞಾನಾರ್ಜನೆ, ಮತ್ತು ಸಂಯಮ ಪಾಲನೆ ರಮದಾನ್ ತಿಂಗಳ ವೈಶಿಷ್ಟ್ಯ ಎನ್ನಬಹುದು. ವ್ರತಾಚರಣೆಯ ಮೂಲಕ ರಮದಾನ್ ತಿಂಗಳು ನಮಗೆ “ಸ್ವ ನಿಗ್ರಹ” ದ ಗುಣವನ್ನೂ, ಸಂಯಮ ಶೀಲತೆಯನ್ನೂ ಕಲಿಸುತ್ತದೆ. ಈ ತೆರನಾದ ನಡವಳಿಕೆ ಮುಸ್ಲಿಮರು ಬರೀ ರಮದಾನ್ ಮಾಸಕ್ಕೆ ಸೀಮಿತಗೊಳಿಸದೆ ತಮ್ಮ ಬದುಕಿನ ಪ್ರತೀ ಘಳಿಗೆಯಲ್ಲೂ ಪಾಲಿಸಿದರೆ ದೇವರು ಯಶಸ್ಸನ್ನು ದಯಪಾಲಿಸುತ್ತಾನೆ ಸಮಾಜಕ್ಕೆ ಆದರ್ಶಪ್ರಾಯನಾಗಿ ಬದುಕುತ್ತಾನೆ.  

ಪ್ರತೀ ಮುಸ್ಲಿಂ ಮನೆಯಲ್ಲೂ ರಮದಾನ್ ಒಂದು ವಿಶೇಷ ತಿಂಗಳಾಗಿರುತ್ತದೆ. ಅದರಲ್ಲೂ ಮಕ್ಕಳಿಗೆ ಒಂದು ರೀತಿಯ ಸಂತಸ. ಐದು ವರ್ಷದ ಮೇಲ್ಪಟ್ಟ ಮಕ್ಕಳೂ ಸಹ ಪೂರ್ತಿ ತಿಂಗಳಲ್ಲದಿದ್ದರೂ ಸಾಧ್ಯವಾದಷ್ಟು ದಿಂದ ಉಪವಾಸ ಆಚರಿಸಲು ಯತ್ನಿಸುತ್ತಾರೆ. ನನ್ನ ಆರು ವರ್ಷದ ಮಗ ಕಳೆದ ಎರಡು ವರ್ಷಗಳಿಂದ ೮ – ೧೦ ದಿನ ಉಪವಾಸವಿದ್ದನು. ಸಂಜೆಯಾಗುತ್ತಿದ್ದಂತೆ ಮಕ್ಕಳು ಕಾತುರದಿಂದ ಮಸ್ಜಿದ್ ಗಳ ಗೋಪುರಗಳು ಹೊರಡಿಸುವ ಅದಾನ್ ಗಾಗಿ ಕಾದು ನಿಂತು “ಅಲಾಹು ಅಕ್ಬರ್” (ದೇವರು ಸರ್ವಶ್ರೇಷ್ಠ ) ಎನ್ನುವುದನ್ನು ಕೇಳುತ್ತಲೇ ಓಡಿ ಬಂದು ಅಮ್ಮಾ, ಅಪ್ಪಾ, ಅದಾನ್ ಆಗುತ್ತಿದೆ, ಬೇಗ ನೀರು ಕುಡಿಯಿರಿ ಎಂದು ಉತ್ತೇಜಿಸುತ್ತಾರೆ.

೩೦ ದಿನಗಳ ಉಪವಾಸ ಮುಗಿದ ನಂತರ ಚಂದ್ರ ದರ್ಶನ ವಾಗುತ್ತಲೇ “ಈದ್” ಸಂಭ್ರಮ ಎಲ್ಲೆಡೆ. ಚಂದ್ರ ದರ್ಶನ ಆಗುತ್ತಲೇ ಮಾರನೆ ದಿನದ ಈದ್ ನಂದು ಯಾರೂ ತಿನ್ನಲು ಇಲ್ಲದೆ ಬಳಲಬಾರದು ಎಂದು ಬಡಬಗ್ಗರಿಗೆ ಅಕ್ಕಿ ದಾನ ಮಾಡುತ್ತಾರೆ. ಈ ದಾನದಿಂದಾಗಿಯೇ ಈದ್ ಹಬ್ಬಕ್ಕೆ “ಈದ್ ಅಲ್ ಫಿತ್ರ್” ಎಂದು ಹೆಸರು.         

ಸೌದಿ ಅರೇಬಿಯಾದಲ್ಲಿ ರಮದಾನ್ ತುಂಬಾ ಸೊಗಸು. ಇಡೀ ತಿಂಗಳು ಮತ್ತು ಅದರ ನಂತರ ಬರುವ ಸುಮಾರು ಹತ್ತು ದಿನಗಳ ಈದ್ ಸಂಭ್ರಮ. ಇಡೀ ನಗರವೇ ಅಲಂಕಾರದಲ್ಲಿ ಮುಳುಗಿರುತ್ತದೆ. ಎಲ್ಲೆಲ್ಲೂ ವಿಶೇಷ offer ಗಳು, ಬಹುಮಾನಗಳು, ರಸ್ತೆ ಬದಿಯಲ್ಲಿ ಉಪವಾಸವಿಟ್ಟುಕೊಂಡು ಪ್ರಯಾಣ ಮಾಡುವವರಿಗೆ ಪುಕ್ಕಟೆ ತಿಂಡಿ ತೀರ್ಥಗಳ ವಿತರಣೆ, ನಿರ್ಗತಿಕರಿಗೆ, ಕೆಳಸ್ತರದ ಉದ್ಯೋಗ ಮಾಡುವವರಿಗೆ ದಾನ ಮಾಡುವಲ್ಲಿ ಪೈಪೋಟಿ, ಹೀಗೆ ನಾನಾ ರೀತಿಯ ಚಟುವಟಿಕೆಗಳನ್ನು ಕಾಣಬಹುದು. ಕೆಲಸದ ಸಮಯವೂ ನಾಲ್ಕು ಅಥವಾ ಐದು ಘಂಟೆಗಳು. ಹಾಗಾಗಿ ಉಪವಾಸವಿರುವುದು ಬಹಳ ಸುಲಭ ಅರೇಬಿಯಾದಲ್ಲಿ.