ಮಾಧ್ಯಮಗಳು ನಂಬಲನರ್ಹ

ಚಾರ್ಲ್ಸ್ ಶೋಭರಾಜ್ ಅಂತಾರಾಷ್ಟ್ರೀಯ ಕುಖ್ಯಾತಿಯ ಕ್ರಿಮಿನಲ್. ಸರಣಿ ಕೊಲೆಗಾರ, serial killer. ಹಲವಾರು ಹೆಣ್ಣು ಮಕ್ಕಳನ್ನು ಕೊಲೆಗೈದಿದ್ದ ಈತನನ್ನು ಬಿಕಿನಿ ಕಿಲ್ಲರ್ ಎಂದೂ ಕರೆಯುತ್ತಾರೆ. ಈತ ಪೂಲೀಸರಿಗೆ ಲಂಚ್ ಕೊಟ್ಟೋ ಚಳ್ಳೆ ಹಣ್ಣು ತಿನ್ನಿಸಿಯೋ ತಪ್ಪಿಸಿಕೊಳ್ಳುತ್ತಿದ್ದ. ಒಮ್ಮೆ ಯಾರೋ ಒಬ್ಬ ಭಾರತೀಯ ಪೊಲೀಸರು ಇವನ ಹಿಂದೆ ಬಿದ್ದಿದ್ದಾರೆ ಎಂದು  ಪ್ರಸ್ತಾಪಿಸಿದಾಗ ಶೋಭ ರಾಜ್, ಓಹ್, ಭಾರತೀಯ ಪೊಲೀಸರು ೫ ರೂಪಾಯಿ ಪೊಲೀಸರು, ಐದು ರೂಪಾಯಿಯ ನೋಟನ್ನು ಕೊಟ್ಟರೆ ಬಿಟ್ಟು ಬಿಡುತ್ತಾರೆ ಎಂದು ಗಹ ಗಹಿಸಿ ನಕ್ಕಿದ್ದ. ಕೊನೆಗೆ ಇವನಿಗೆ ಮುಳುವಾಗಿದ್ದು ಒಬ್ಬ ಒಬ್ಬ ದಕ್ಷ ಭಾರತೀಯ ಪೊಲೀಸ್ ಅಧಿಕಾರಿ. ಚಾಣಕ್ಷ  ಪೊಲೀಸ್ ಅಧಿಕಾರಿ  “ಮಧುಕರ್ ಜೆನ್ಡೇ” ೧೯೯೬ ರಲ್ಲಿ ಅತ್ಯದ್ಭುತವಾದ ಕಾರ್ಯಾಚರಣೆ ಯೊಂದರಲ್ಲಿ ಚಾರ್ಲ್ಸ್ ನನ್ನು ಅರೆಸ್ಟ್ ಮಾಡಿದ್ದರು.

ಇವನ ದಸ್ತಗಿರಿಯೊಂದಿಗೆ ಭಾರತೀಯ ಪೊಲೀಸರು ಐದು ರೂಪಾಯಿ ಪೊಲೀಸರಲ್ಲ ಎಂದು ಸುಂದರವಾಗಿ ಸಾಬೀತಾಯಿತು. ಪೊಲೀಸ್ ಇಲಾಖೆಯ ವೃತ್ತಿಪರತೆ ವಿಜ್ರಂಭಿಸಿತು.

ವಿಜಯ್ ಮಲ್ಯ ರವರ ಕಿಂಗ್ ಫಿಶರ್ ಆರ್ಥಿಕ ಸಂಕಟ ದಲ್ಲಿರುವ ವೈಮಾನಿಕ  ಸಂಸ್ಥೆ. ಉತ್ತರ ಭಾರತದ ಮೋಸಗಾರ, ವಂಚಕ ಉದ್ಯಮಿಗಳಲ್ಲಿ ರಕ್ತಗತವಾಗಿರುವ ಕಪಟತನ, ಸರಕಾರೀ  ವ್ಯವಸ್ಥೆಯನ್ನ ಸಲೀಸಾಗಿ ಜೇಬಿಗಿಳಿಸಿ ಕೊಳ್ಳುವ ಕಂತ್ರಿ ಗುಣ ಈ ಕನ್ನಡಿಗ ಉದ್ಯಮಿಯಲ್ಲಿ ಇಲ್ಲ. ಇವರ ಹಣಕಾಸು ತೊಂದರೆಗಳಿಗೆ ರೆಕ್ಕೆ ಪುಕ್ಕ ಕೊಟ್ಟಿದ್ದು ಮಾತ್ರವಲ್ಲದೆ ವರ್ಣರಂಜಿತವಾಗಿ ಪ್ರಕಟಿಸಿ ತೀಟೆ ತೀರಿಸಿ ಕೊಂಡವು ಪತ್ರಿಕೆಗಳು. ಬಹುಶಃ ಕೆಲವು ಉದ್ಯಮಿಗಳ ಹಾಗೆ ದಕ್ಷಿಣೆ ಬಿಸಾಕುವ ಗುಣ ಮಲ್ಯರಲ್ಲಿಲ್ಲದ್ದರಿಂದಲೋ ಏನೋ ಇವರ ಬೆನ್ನು ಹತ್ತಿದವು. ತಮ್ಮನ್ನು ಗುರಿಯಾಗಿಸಿ ನಡೆಯುತ್ತಿರವ witch hunting ಗೆ ಬೇಸತ್ತ ಮಲ್ಯ ಕೊನೆಗೆ ಉದುರಿಸಿದರು ನನಗೂ ನಿಮಗೂ ತಿಳಿದಿದ್ದ ನುಡಿ ಮುತ್ತುಗಳನ್ನು; indian media has no credibility. ಭಾರತೀಯ ಮಾಧ್ಯಮಗಳು “ನಂಬಲರ್ಹ ಎಂದು.  ನಂಬಲನರ್ಹ ಅಥವಾ ಯೋಗ್ಯತೆಗೆಟ್ಟ  ಮಾಧ್ಯಮಗಳು ಎಂದರೂ ಸರಿಯೇ.

ಪತ್ರಕರ್ತರ ಮೇಲಿನ ವಿಶ್ವಾಸ ಕ್ರಮೇಣ ಜನರಲ್ಲಿ ಕಡಿಮೆಯಾಗುತ್ತಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ೧೯೮೦ ರ ಕ್ಕಿಂತ ಮೊದಲಿದ್ದ  ಪತ್ರಕರ್ತರ ಮೇಲಿನ ವಿಶ್ವಾಸ ಈಗ ಇಲ್ಲ. ಈಗ ಮಾಧ್ಯಮಗಳು ಸರಕಾರೀ ಯಂತ್ರಗಳ, ರಾಜಕಾರಣಿಗಳ ‘ಸ್ಟೆನೋ ಗ್ರಾಫರ್’ ಗಳಾಗಿ ಮಾರ್ಪಟ್ಟಿದ್ದಾರೆ. ರಾಜಕಾರಣಿ ಅಥವಾ ಅಧಿಕಾರಿಗಳು ಹೇಳಿದ್ದು ಸರಿಯೇ ಎಂದು ತನಿಖೆ ನಡೆಸಿ ವರದಿ ಮಾಡುವ ವ್ಯವಧಾನ, ವೃತ್ತಿಪರತೆ  ಇವರಿಗಿಲ್ಲ. ಯಾವ ಆಮಿಷಕ್ಕಾಗಿ ಪತ್ರಕರ್ತನಿಗಿರಬೇಕಾದ ಗುಣಗಳನ್ನ ಇವರು ಬಲಿ ಕೊಟ್ಟಿದ್ದಾರೆ ಎನ್ನುವುದು ಜನರಿಗೆ ಗೊತ್ತಿಲ್ಲ. ಕೆಲವು ಪತ್ರಕರ್ತರು ತಮ್ಮ ರಾಜಕೀಯ ಅಜೆಂಡಾ ಗಳಿಗೆ ಹೊಂದುವ ವರದಿ ಪ್ರಕಟಿಸಿ ಪತ್ರಕರ್ತ ಹುದ್ದೆಗೆ ಕಳಂಕ ತರುವ, ಆ ಹುದ್ದೆಯ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿರುವುದೂ ಸಹ ಜನ ಗಮನಿಸುತ್ತಿದ್ದಾರೆ.      ಒಂದು ಪತ್ರಿಕೆ ಬರೆದ ವರದಿಗಳ ಕಾರಣ ಕರ್ನಾಟಕದ ಒಂದು ಪಟ್ಟಣ  ಸಂಪೂರ್ಣ ಬಂದ್ ಅನ್ನೂ ಆಚರಿಸಿತಂತೆ. ಹಿಂದೆಂದೂ  ಇದನ್ನು ಹೋಲುವ ಘಟನೆ ಕರ್ನಾಟಕದಲ್ಲಿ ನಡೆದ ಬಗ್ಗೆ ನನಗೆ ನೆನಪಿಲ್ಲ. unprecedented ಎನ್ನಬಹುದುನಮ್ಮ ನಾಡಿನಲ್ಲಿ ಪತ್ರಿಕೋದ್ಯಮ ಈ ಮಟ್ಟಕ್ಕೆ ಬಂದು ನಿಂತಿದೆ ಇಂದು.

ಒಬ್ಬ ಪತ್ರಕರ್ತ ಎನ್ನಿಸಿ ಕೊಳ್ಳಲು ನಾಲ್ಕು ವಾಕ್ಯಗಳನ್ನು ಹೆಣೆಯುವ ಕಲೆ ರೂಢಿಸಿ ಕೊಂಡರೆ ಸಾಲದು, ಕನಿಷ್ಠ ಓದು ಬರಹದ ವಿದ್ಯೆ ಮಾತ್ರ ಸಾಲದು. ಪಕ್ಷ ಅಥವಾ ಸಿದ್ಧಾಂತ ನಿಷ್ಠೆ ತೋರಿಸುವ ‘ಪಟ್ಟೆ’ಗಳು ಸಹ ಇರಕೂಡದು   ಪತ್ರಕರ್ತನಲ್ಲಿ. ಬದಲಿಗೆ   ವೃತ್ತಿ ಪರತೆಯ ಗುಣಗಳು ಇರಬೇಕು, libel and libel law ಇವುಗಳ ಜ್ಞಾನವೂ ಇರಬೇಕು. ಓಹ್, ಇದು ಒಂದು ಬಹು ದೊಡ್ಡ ಬೇಡಿಕೆಯಾಗಿ ತೋರಬಹುದೇನೋ ಪತ್ರಕರ್ತರ ವೇಷ ತೊಟ್ಟ ಜನರಿಗೆ.

ತಮ್ಮ ಬಗೆಗಿನ ವಿಜಯ್ ಮಲ್ಯರವರ ಲೆಕ್ಕಾಚಾರ ತಪ್ಪು ಎಂದು ಜನರಿಗೆ ಮನವರಿಕೆ ಮಾಡುವ ಕೆಲಸ ಈ ಪತ್ರಕರ್ತ ಸಮೂಹ ಮಾಡೀತೆ?

 

ನಡತೆ ಮತ್ತು ಚಡ್ಡಿ

“Attitude is like your underwear; you must wear it, but never show it. POONAM PANDEY

ಈ ಮೇಲಿನ ಸುಭಾಷಿತ ಪೂನಂ ಪಾಂಡೆ ಪ್ರೊಮೋಟ್ ಮಾಡಿದ ವಸ್ತ್ರದ ಮೇಲೆ ಇದೆಯಂತೆ. ಒಂದ್ ನಿಮ್ಷ, ಮಾಡೆಲ್ ಪೂನಂ ಪಾಂಡೆ ಗೂ ವಸ್ತ್ರಕ್ಕೂ ಏನು ಸಂಬಂಧ, ಅವೆರಡೂ ಹಾವು ಮುಂಗುಸಿ ಥರ ಅಲ್ಲವೋ ಎಂದಿರಾ? ಹೋಗಲಿ ಬಿಡಿ, ಆಕೆ ಮಾಡೆಲ್ ಹೆಚ್ಚು ಬಿಚ್ಚಿದಷ್ಟು ಜೇಬು ತುಂಬೋದು ಸುಲಭ. ಮೇಲಿನ attitude ಬಗೆಗಿನ ಒಂದು ರೀತಿಯ ಕೀಳು ಅಭಿರುಚಿಯ ಸುಭಾಷಿತ ಓದಿ ಆಧುನಿಕ ಮನುಷ್ಯ ಇದಕ್ಕಿಂತ ಒಳ್ಳೆಯ ಮಾತನ್ನು ಹೆಣೆಯಲಾರ ಎನ್ನಿಸಿತು. attitude ಅದ್ಹೇಗೆ ಒಳ ಉಡುಪಿನ ಥರ ಆಗುತ್ತೋ ಗೊತ್ತಿಲ್ಲ. ಒಳ ಉಡುಪು (ಕಾಚಾ) ತೊಡದೆ ಓಡಾಡುವವರೂ ಇದ್ದಾರೆ. ಅಂದರೆ ಅವರಿಗೆ attitude ಇರೋಲ್ವಾ? ಇದೇ ತೆರನಾದ ಮತ್ತೊಂದು ಚೀಪ್ ಆದ ಹೇಳಿಕೆ ಆಂಗ್ಲ ಭಾಷೆಯಲ್ಲಿದೆ. opinions are like assholes, every one has one. ವಾವ್, ಎಂಥಾ ಸೃಜನಶೀಲತೆ !

ಪಾಪ ಪೂನಂ ಪಾಂಡೆ ತನ್ನ ಪಾಡಿಗೆ ತಾನು ಎಷ್ಟು ಬಿಚ್ಚಿದರೆ ಚೆನ್ನ ಎಂದು ಲೆಕ್ಕ ಹಾಕುತ್ತಿದ್ದರೆ ಪಕ್ಕದ ಬಾಂಗ್ಲಾ ದೇಶದ ಸಾಹಿತಿ ತಸ್ಲೀಮಾ ನಸ್ರೀನ್ ಪಾಂಡೆ ಬಗ್ಗೆ ತನ್ನ ಟ್ರೇಡ್ ಮಾರ್ಕ್ ಕೀಳು ಮಟ್ಟದ ಟ್ವೀಟ್ ಹರಿ ಬಿಟ್ಟಿದ್ದಾಳೆ; “Poonam Pandey got naked but not satisfied. She wanna do dirtiest things none did before. Wants to get f****d in public!” . ಒಬ್ಬ ಸಾಹಿತಿ ಹೇಳೋ ಮಾತುಗಳು ಇವು.    

ಒಳ ಉಡುಪಿಗೆ ‘ಚಡ್ಡಿ’ ಬದಲು ‘ಕಾಚಾ’ ಎಂದು ಬರೆದಿದ್ದೇನೆ, politically incorrect ಆಗೋದು ಬೇಡ ಎಂದು.  

ಆಟಿಟ್ಯೂಡ್ ಪದಕ್ಕೆ ಪರ್ಯಾಯವಾಗಿ 1) ಮನೋಭಾವ, ಭಾವನೆ, ದೃಷ್ಟಿಕೋನ, ಧೋರಣೆ, ನಿಲವು 2) ದೇಹದ ಭಂಗಿ ಪದಗಳು ನನಗೆ ಇಷ್ಟವಾಗಲಿಲ್ಲ. ನನ್ನ ಪ್ರಕಾರ ನಡತೆ ಸರಿಯಾದ ಪದ.

ಬುರ್ಖಾ ನಿಷೇಧ

ಯೂರೋಪಿನಲ್ಲಿ ಈಗ ಬುರ್ಖಾ ನಿಷೇಧಿಸುವ ಕುರಿತ ಚರ್ಚೆ. ಇನ್ನು ಕೆಲವೇ ದಿನಗಳಲ್ಲಿ ಫ್ರಾನ್ಸ್ ಸಂಸತ್ತು ಬುರ್ಖಾವನ್ನು ನಿಷೇಧಿಸಲಿದೆ. ಎಂಥ ವೈಚಿತ್ರ್ಯ ಇದು. ಒಂದು ಕಡೆ ಮಹಿಳೆಯ ಜನ್ಮಸಿದ್ಧ ಹಕ್ಕುಗಳ ಬಗ್ಗೆ ದೊಡ್ಡ ದೊಡ್ಡ ಭಾಷಣಗಳು, ಚಟುವಟಿಕೆಗಳು ಜರಗುತ್ತಿದ್ದರೆ ಮತ್ತೊಂದು ಕಡೆ ತಾನು ಮಾನವಾಗಿ ತನ್ನ ಶರೀರವನ್ನು ಮುಚ್ಚಿಕೊಂಡು ಓಡಾಡುತ್ತೇನೆ ಎಂದು ಹೇಳುವ ಮಹಿಳೆಯರ ಮೇಲೆ ಸಮಾಜದ ದಿಗ್ಬಂಧನ, ಕಾನೂನು. ಫ್ರಾನ್ಸ್ ನ ಅಧ್ಯಕ್ಷ ಮಹಾಶಯನ ಲೈಂಗಿಕ ಚಟುವಟಿಕೆ ತಿಳಿದವರಿಗೆ ಅಲ್ಲಿನ ಸಂಸತ್ತಿನಲ್ಲಿ ಅವನಂಥ ಎಷ್ಟು ಸದಸ್ಯರು ತಮ್ಮ ಅಧ್ಯಕ್ಷನ ರೀತಿ ಹೆಣ್ಣನ್ನು ತಮ್ಮ ತೃಷೆಗಾಗಿ ಉಪಯೋಗಿಸಿಕೊಳ್ಳುತ್ತಿರಬಹುದು ಎಂದು ಯೋಚಿಸಿದರೆ ತಪ್ಪಿಲ್ಲ. ಇದೇ ನಡತೆಗೆಟ್ಟ ಗಂಡಸರು ಹೆಣ್ಣು ವಿವಸ್ತ್ರಳಾಗೋದನ್ನು ಬಯಸುತ್ತಾ ಮಾನವಾಗಿ ನಡೆಯಲಿಚ್ಚಿಸುವ ಮಹಿಳೆಯರ ಮೇಲೆ ಕಾನೂನಿನ ತೂಗುಗತ್ತಿಯನ್ನು ಇಳಿ ಬಿಡುತ್ತಾರೆ. ಇವರಿಗೆ ಮಹಿಳೆ ಮೈತುಂಬಾ ಹೊದ್ದು ಕೊಳ್ಳುವುದು ಗುಲಾಮಗಿರಿಯ ಸಂಕೇತ. ಶೋಷಣೆಯ ಹೆಗ್ಗುರುತು. ಹೆಣ್ಣು ಕನಿಷ್ಠ ಉಡುಗೆ ತೊಡುವುದು ultimate civilization.     

ಬೆತ್ತಲೆ, ಕನಿಷ್ಠ ಉಡುಗೆ ಇಷ್ಟ ಪಡುವ ವಿಶ್ವ. ದೊಡ್ಡ ಕೋಲಾಹಲವನ್ನೇ ಸೃಷ್ಟಿಸುತ್ತಿದೆ ಈ ಸುಮಾರು ಐದು ಮೀಟರು ಬಟ್ಟೆ. ಮೂರೂ ಬಿಟ್ಟು, ಕನಿಷ್ಠ ಉಡುಗೆ ತೊಟ್ಟು ತಮ್ಮ ಶರೀರ ದಾರಿಹೋಕರ ಕಣ್ಣುಗಳಿಗೆ ಎಂದು ಬಿಂಕದಿಂದ ನಡೆಯುವ ಉದಾರವಾದಿ ಮಹಿಳೆ ಮತ್ತು ಇಂಥ ಉಡುಗೆಗಳಲ್ಲಿ ಪರಸ್ತ್ರೀಯರನ್ನು ನೋಡಿ ನಾಲಗೆ ಚಪ್ಪರಿಸಿ ಸವಿಯುವ  ಪುರುಷರಿಗೆ ಈ ಬುರ್ಖಾ ಎನ್ನುವ ವಸ್ತ್ರ ಸಹ್ಯವಾದರೂ ಹೇಗಾದೀತು? ಸೌಂದರ್ಯ ಸ್ಪರ್ದೆಯ ಹೆಸರಿನಲ್ಲಿ ಹೆಣ್ಣನ್ನು ನಾನಾ ಬಗೆಯ  ಉಡುಗೆಗಳಲ್ಲಿ ಅತ್ತಿಂದಿತ್ತ ಓಡಾಡಿಸಿ ಕ್ಯಾಮೆರಾ ಕಣ್ಣುಗಳಿಂದ ಅವಳ ಉಬ್ಬು ತಗ್ಗುಗಳನ್ನು ವಿವಿಧ ಕೊನಗಳಲ್ಲಿ ಸೆರೆಹಿಡಿದು, ಅವಳ ಅಂಗ ಸೌಷ್ಟವದ ಅಳತೆ ತೆಗೆದು ತಾವು ಕಲ್ಪಿಸಿಕೊಂಡ ಮಾನ ದಂಡಕ್ಕೆ ಅವಳ ಅಳತೆಯಿದ್ದರೆ ಅವಳನ್ನು ವಿಶ್ವ ಸುಂದರಿ, ಮಿಸ್ ವರ್ಲ್ಡ್, ಮಿಸ್ ಯೂನಿವರ್ಸ್, ಮಿಸ್ ದ್ಯಾಟ್, ಮಿಸ್ ದಿಸ್ ಎಂದು ಪ್ರಶಸ್ತಿ ಕೊಟ್ಟು ನಗ್ನತೆಯನ್ನು, ಬಹಿರಂಗ ಸೌಂದರ್ಯವನ್ನು ಸನ್ಮಾನಿಸುವ, ಆದರಿಸುವ ಸಮಾಜಕ್ಕೆ ಖಂಡಿತವಾಗಿಯೂ ಪಥ್ಯವಲ್ಲ ಬುರ್ಖಾ. ಈ ರೀತಿಯ ಅಳತೆಗೆ ನಿಲುಕದ ಬಹುಪಾಲು ಮಹಿಳೆಯರು  ಕೀಳರಿಮೆಯಿಂದ ಬಳಲುತ್ತಿದ್ದರೆ ಅದೊಂದು ಸಮಸ್ಯೆ ಅಲ್ಲ ಇವರಿಗೆ. size and beauty obssessed ಸಮೂಹಕ್ಕೆ.

ಬುರ್ಖಾ ನಿಷೇಧಿಸುವಲ್ಲಿ  ಫ್ರಾನ್ಸ್ ಕಾನೂನನನ್ನು ಜಾರಿ ಗೊಳಿಸಿದಂತೆ ಇಂಗ್ಲೆಂಡ್ ಸಹಾ ಬುರ್ಖಾ ನಿಷೇಧ ಕಾನೂನನ್ನು ತರಬೇಕೆಂದು ಒತ್ತಾಯಿಸುತ್ತಿರುವ ಜನರು ಹೆಣ್ಣನ್ನು ಸೌಂದರ್ಯ  ಪ್ರಸಾಧನ ಉತ್ಪಾದಿಸುವವರ, ಕಾಮ ಪಿಪಾಸುಗಳ ಆಟಿಕೆಯಾಗಿ ಬಳಸಿಕೊಳ್ಳುತ್ತಾ ತಮ್ಮನ್ನು ತಾವು ನಾಗರೀಕರು ಎಂದು ಬೆನ್ನು ತಟ್ಟಿ ಕೊಳ್ಳುವವರ ದಾರ್ಷ್ಟ್ಯತನವನ್ನು ಮೆಚ್ಚಲೇ ಬೇಕು. ಬುರ್ಖಾ ಗುಲಾಮಗಿರಿಯ ಸಂಕೇತ, ಪುರುಷರ ಒತ್ತಾಯಕ್ಕೆ ಮಣಿದು ಮಹಿಳೆಯರು ಧರಿಸುತ್ತಾರೆ ಎಂದು ವಾದಿಸುವ ಸಮೂಹಕ್ಕೆ ಈ ಸತ್ಯದ ಅರಿವಾದದ್ದು ಯಾವಾಗಲೋ ಏನೋ? ಅವರಿಗೆ ಹೇಗೆ ಗೊತ್ತು ಇದು ಪುರುಷ ಹೇರಿದ ಕಟ್ಟಳೆ ಎಂದು? ಸ್ವಂತ ಇಷ್ಟದಿಂದ ಹಿಜಾಬ್ ಧರಿಸುವ ಮಹಿಳೆಯರನ್ನು ನಾನು ನೋಡಿದ್ದೇನೆ. ತನ್ನ ತಾಯಿ ಧರಿಸುವ ಹಿಜಾಬನ್ನು ನೋಡಿ ಪುಟ್ಟ ಮಗುವೂ ತಾಯಿಯನ್ನು ಅನುಕರಿಸಲು ನೋಡುತ್ತದೆ. ಹೊರಗೆ ಮಹಿಳೆಯರು ತಮಗಿಷ್ಟದ, ನವೀನ ಶೈಲಿಯ ಬಟ್ಟೆ ಧರಿಸಿ ಹೋಗುವುದನ್ನು ಕಂಡರೂ ಆ ಪುಟ್ಟ ಮಗುವಿಗೆ ತನ್ನ ತಾಯಿ ಧರಿಸುವ ಕಪ್ಪು ಬಣ್ಣದ ಬುರ್ಖಾ ಕರಾಳವಾಗಿ ಕಾಣೋದಿಲ್ಲ. ಇಲ್ಲಿ ಆ ಮುಗ್ಧ ಮಗು ಕಾಣೋದು ತನ್ನ ತಾಯಿಯ ನಾರ್ಮಲ್ ಉಡುಗೆ ಮಾತ್ರ. ಬುರ್ಖಾ ಪದ್ಧತಿ ಇಸ್ಲಾಮಿನ ನಿಯಮವೋ, ಕಟ್ಟಳೆಯೋ ಅಲ್ಲ. ಪವಿತ್ರ ಕುರಾನಿನಲ್ಲಿ ದೇವರು ನಿರ್ದೇಶಿಸಿದ್ದು ಹೆಣ್ಣು ಮತ್ತು ಗಂಡು ಮೈ ತುಂಬಾ ಉಡಲು. ಅಂಗ ಸೌಷ್ಟವ ಪ್ರದರ್ಶಿಸದಂತೆ ತಾಕೀತು. ಹೆಣ್ಣು ಗಂಡು ಇಬ್ಬರೂ ತಮ್ಮ ದೃಷ್ಟಿಗಳನ್ನು ಅನಾವಶ್ಯವಾಗಿ ಬೇಕೆಂದಲ್ಲಿ ಹರಿಬಿಡದೆ ನಡೆಯಲು ಅಪೇಕ್ಷೆ, ನೆಲ ನೋಡಿ ವಿನೀತರಾಗಿ ನಡೆಯಲು ಸೂಚನೆ. ಇವು ಮಾತ್ರ ಇರುವುದು ಕುರಾನಿನಲ್ಲಿ. ಬಟ್ಟೆ ಹೀಗೆ ಇರಬೇಕು, ಇಂಥ ಬಣ್ಣದ್ದೇ ಆಗಿರಬೇಕು ಎಂದು ಎಲ್ಲೂ ಹೇಳಿಲ್ಲ. ಹಾಗಿದ್ದರೆ ಬುರ್ಖಾ ಸಾರ್ವತ್ರಿಕವಾಗಿರುತ್ತಿತ್ತು. ವಿಶ್ವದ ಬಹುಪಾಲು ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದಿಲ್ಲ ಎಂದರೆ ನಿಮಗೆ ಅಚ್ಚರಿಯಾಗಬಹುದಲ್ಲವೇ? ದೂರದ ದೇಶಗಳ ಮಾತೇಕೆ ನಮ್ಮ ಪಕ್ಕದ ಕೇರಳದಲ್ಲೂ ಬಹುಪಾಲು ಮಹಿಳೆಯರು ಬುರ್ಖಾ ಧರಿಸುವುದಿಲ್ಲ. ಉದ್ದದ ತೋಳಿನ ರವಿಕೆ, ಮೈ ತುಂಬಾ ಸೀರೆ ಉಟ್ಟು ಕೊಳ್ಳುತ್ತಾರೆ. ಅಲ್ಲಿ ಯಾವ ಮುಲ್ಲಾ ಮಹಾಶಯರೂ ಫತ್ವಾ ಹೊರಡಿಸಲಿಲ್ಲ, ಕಪ್ಪು ಬಟ್ಟೆಯಿಂದ ಬಿಗಿದು ಕೊಳ್ಳಿ ನಿಮ್ಮ ಶರೀರವನ್ನು ಎಂದು. ಬುರ್ಖಾ ಒಂದು ಸಾಮಾಜಿಕ, ಸಾಂಸ್ಕೃತಿಕ ಉಡುಗೆ. ಸುಡಾನಿನ ಮಹಿಳೆಯರು ಸೀರೆ ಥರಾ ಕಾಣುವ  ಬಟ್ಟೆಯನ್ನು ಮೈ ತುಂಬಾ ಹೊದ್ದು ಕೊಳ್ಳುತ್ತಾರೆ. ಇರಾನಿನಲ್ಲಿ ಎಲ್ಲಾ  ಮಹಿಳೆಯರೂ ಧರಿಸುವುದಿಲ್ಲ. ಶೇಕಡಾ ೯೮ ಮುಸ್ಲಿಮರಿರುವ ತುರ್ಕಿ, ಟುನೀಸಿಯಾ ದೇಶಗಳ ಮಹಿಳೆಯರೂ ಸಹ ಬುರ್ಖಾ ಧಾರಿಗಳಲ್ಲ. ಅಲ್ಲಿ ಮುಲ್ಲಾಗಳ ಹಾವಳಿ ಇಲ್ಲ ಎಂದಲ್ಲ, ಆದರೆ ಇದೊಂದು ಧಾರ್ಮಿಕ ಉಡುಗೆ ಯಲ್ಲ ಎನ್ನುವ ಅರಿವಿರುವುದರಿಂದಲೇ ಅವರು ಅಲ್ಲಿನ ಮಹಿಳೆಯರ ಮೇಲೆ ಈ ವಸ್ತ್ರವನ್ನು ಹೇರದಿರುವುದು.

ಈ ಮೇಲಿನ ಮಾತಿಗೆ ಪುಷ್ಟಿಯಾಗಿ ಇತ್ತೀಚೆಗೆ ನಡೆದ ಘಟನೆಯೊಂದನ್ನು ನಿಮ್ಮ ಅವಗಾಹನೆಗೆ ತರಲು ಇಚ್ಛಿ ಸುತ್ತೇನೆ. ಪುರಾತನ ನಾಗರೀಕತೆಯ ತವರಾದ ಈಜಿಪ್ಟ್ ದೇಶ ಇಸ್ಲಾಂ ಧರ್ಮವನ್ನ ಅನುಸರಿಸುವ ದೇಶ. ಅಲ್ಲಿನ ವಿಶ್ವವಿಖ್ಯಾತ ವಿಶ್ವ ವಿದ್ಯಾಲಯ ಅಲ್- ಅಜ್ಹರ್ ಸ್ಥಾಪಿತ ವಾಗಿದ್ದು ಕ್ರಿ. ಷ ೯೫೦ ರಲ್ಲಿ. ಅಲ್ಲಿನ “ರೆಕ್ಟರ್” ಆಗಿದ್ದ ಇತ್ತೀಚೆಗೆ ದಿವಂಗತರಾದ ಶೇಖ್ ತಂತಾವೀ. ಇವರು ಜಗದ್ವಿಖ್ಯಾತ ಮುಸ್ಲಿಂ ವಿಧ್ವಾಂಸ. ಅತ್ಯಂತ ಕ್ಲಿಷ್ಟ ಶರಿಯಾ ದ ಸಮಸ್ಯೆಗಳಿಗೆ ಮುಸ್ಲಿಂ ವಿಶ್ವ ಉತ್ತರ ಅರಸೋದು ಇವರಲ್ಲಿ. ಆರು ತಿಂಗಳ ಹಿಂದೆ ನಡೆದ ವಿಶ್ವ ವಿದ್ಯಾಲಯದ ಸಮಾರಂಭವೊಂದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಸಭಿಕರಲ್ಲಿ ಒಬ್ಬ ಹದಿ ಹರೆಯದ ಯುವತಿಯೊಬ್ಬಳು ಹಿಜಾಬ್ ಮಾತ್ರವಲ್ಲದೆ ಕಣ್ಣು ಮಾತ್ರ ಕಾಣುವಂಥ “ನಿಕಾಬ್” ಸಹ ಧರಿಸಿದ್ದಳು. ಭಾಷಣ ಮಾಡುತ್ತಿದ್ದ ತಂತಾವೀ ಯುವತಿಗೆ ಹೇಳಿದರು ಮುಖದ ಮೇಲಿನ ನಿಕಾಬ್ ತೆಗೆಯುವಂತೆ. ಆಕೆ ಒಪ್ಪಲಿಲ್ಲ. ಒತ್ತಾಯಿಸಿದಾಗ ಆಕೆ ಹೇಳಿದಳು ಇದು ನನ್ನ ಧಾರ್ಮಿಕ ಉಡುಗೆ, ನನ್ನ ಸ್ವಂತ ಇಷ್ಟದಿಂದ ಧರಿಸಿದ್ದು ಎಂದು. ಇದನ್ನು ಕೇಳಿ ಕುಪಿತರಾದ ತಂತಾವೀ ಹೇಳದರು, ಸಾವಿರಕ್ಕೂ ಹೆಚ್ಚು ವರ್ಷಗಳ ಚರಿತ್ರೆಯಿರುವ ಈ ಸುಪ್ರಸಿದ್ಧ ವಿದ್ಯಾಲಯದ ಕುಲಪತಿಯಾದ ನನಗಿಂತ ನಿನಗೆ ಗೊತ್ತೋ ಇಸ್ಲಾಮಿನ ಉಡುಗೆ ಬಗ್ಗೆ? ನೀನು ಧರಿಸುತ್ತಿರುವ ಮುಖ ಮುಚ್ಚಿ ಕೊಳ್ಳುವ ನಿಕಾಬ್ ಇಸ್ಲಾಮಿನ ಕಾನೂನಲ್ಲ, ಅದೊಂದು ಸಾಮಾಜಿಕ ಉಡುಗೆ ಎಂದು ಹೇಳಿ ಆಕೆಯನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡರು. ಅದೊಂದು ದೊಡ್ಡ ವಿವಾದವನ್ನೇ ಸೃಷ್ಟಿಸಿತು ಮುಸ್ಲಿಂ ಜಗತ್ತಿನಲ್ಲಿ, ವಿಶೇಷವಾಗಿ ಅರಬ್ ವಲಯಗಳಲ್ಲಿ. ಆಕೆ ಯಾರ ಬಲವಂತವೂ ಇಲ್ಲದೆ ತನ್ನ ಇಷ್ಟಾನುಸಾರ ಧರಿಸಿದ ವಸ್ತ್ರಕ್ಕೆ ಈ ವಿಧ್ವಾಂಸರ  ಆಕ್ಷೇಪವೇಕೆ ಎಂದು ಅವರನ್ನು ಟೀಕಿಸಲಾಯಿತು.

ಕುವೈತ್ ಅರಬ್ ಮುಸ್ಲಿಂ ರಾಷ್ಟ್ರ. ಅಲ್ಲಿನ ಸಂಸತ್ತಿನಲ್ಲಿ ಕೆಲವರು ಮಹಿಳಾ ಸದಸ್ಯೆಯರೂ ಇದ್ದಾರೆ. ಅವರಲ್ಲಿ ಇಬ್ಬರು ಸಂಸದೆಯರು ಹಿಜಾಬ್ ಧರಿಸುವುದಿಲ್ಲ. ಅರಬ್ ರಾಷ್ಟ್ರವಾದ ಮೇಲೆ ಧರ್ಮಗುರುಗಳ ವರ್ಚಸ್ಸು ಇಲ್ಲದ್ದಿಲ್ಲ, ಆದರೂ ಯಾವುದೇ ಧರ್ಮ ಗುರುವೂ ಇದುವರೆಗೆ ಆ ಸಂಸದೆಯರ ವಿರುದ್ಧ ಫತ್ವ ಹೊರಡಿಸಲಿಲ್ಲ.

ಮಧ್ಯ ಪ್ರಾಚ್ಯದ “ಜೋರ್ಡನ್” ದೇಶ ಪುರಾತನ ವಂಶಸ್ಥರ ರಾಜಮನೆತನ ಆಳುವ ದೇಶ. ಇಲ್ಲಿನ ರಾಜ ಅಬ್ದುಲ್ಲಾ ರ ಪತ್ನಿ “ರಾನಿಯಾ” ಹಿಜಾಬ ಧರಿಸುವುದಿಲ್ಲ. ಜೋರ್ಡನ್ ದೇಶದ ಧರ್ಮಗುರುಗಳು ಆಕೆಯ ವಿರುದ್ಧ ಫತ್ವ ಹೊರಡಿಸಲಿಲ್ಲ. ಜೋರ್ಡನ್ ದೇಶದ ರಾಣಿ ಮಾತು ದಿವಂಗತ ಬೆನಜೀರ್ ಭುಟ್ಟೋ ಹಿಜಾಬ್ ಧರಿಸದೆಯೂ ಮುಸ್ಲಿಮರಾಗಿರಲು ಸಾಧ್ಯ ಎಂದು ಜಗತ್ತಿಗೆ ತೋರಿಸಿಕೊಟ್ಟು ಇಸ್ಲಾಂ ಯಾವ ರೀತಿ ಶಿಷ್ಟಾಚಾರ ಮತ್ತು ಆಧುನಿಕತೆಯೊಂದಿಗೆ ಹೆಜ್ಜೆ ಹಾಕಬಲ್ಲದು ಎಂದು ತೋರಿಸಿ ಕೊಟ್ಟ ಮುಸ್ಲಿಂ ಮಹಿಳೆಯರು.    

ಒಬ್ಬ ಮಹಿಳೆ ಹಿಜಾಬ್ ಧರಿಸಿದ ಮಾತ್ರಕ್ಕೆ ಪರಿಪೂರ್ಣ ಮುಸ್ಲಿಮಳಾಗುವುದಿಲ್ಲ. ಹಿಜಾಬ್ ಧರಿಸದೆಯೂ ಮುಸ್ಲಿಂ ಮಹಿಳೆ ತನ್ನ ಇಸ್ಲಾಮೀ ಸಂಸ್ಕೃತಿಯನ್ನು ಹೆಮ್ಮೆಯಿಂದ ಕೊಂಡಾಡಬಹುದು. ಆದರೆ ಆಕೆ ಏನನ್ನು ಧರಿಸಬೇಕು ಏನನ್ನು ಧರಿಸಬಾರದು ಎಂದು ನಿರ್ಧರಿಸುವ ಸಮಾಜ ಅವಳಿಗೂ ಅವಳದೇ ಆದ ಹಕ್ಕುಗಳಿವೆ, ಆ ಹಕ್ಕನ್ನು ಚಲಾಯಿಸಿಕೊಳ್ಳುವ ಅವಕಾಶವನ್ನೂ ಆಕೆಗೆ ನೀಡಬೇಕು ಎನ್ನುವುದನ್ನು ಮರೆಯಬಾರದು.    

ಇನ್ನು ಓರ್ವ ಮಹಿಳೆ ತನಗಿಷ್ಟವಾದ ಬಟ್ಟೆ ತೊಟ್ಟರೆ ಅವಳ ಸ್ವಾತಂತ್ರ್ಯಕ್ಕೆ ಹೇಗೆ ಅವಳು ಧರಿಸುವ ವಸ್ತ್ರ ಮುಳುವಾಗುತ್ತದೆ ಅನ್ನೋದೇ ಒಂದು ದೊಡ್ಡ ಒಗಟು.        

ಹೆಣ್ಣಿನ ಸ್ವಾತಂತ್ರ್ಯದ ಬಗ್ಗೆ ಅತೀವ ಕಾಳಜಿ ತೋರಿಸುವ ಸಮಾಜ ಗಲಭೆ, ಜನಾಂಗ ಧ್ವೇಷ ಗಳಂಥ ಸಂದರ್ಭಗಳಲ್ಲಿ ಹೆಣ್ಣಿನ ಮೇಲೆ ನಡೆಯುವ ರಾಜಾರೋಷ ಅತ್ಯಾಚಾರ ಕಣ್ಣಿಗೆ ಗೋಚರಿಸೋಲ್ಲ ಏಕೆಂದರೆ ತಮಗೆ ಎಲ್ಲಿ ಬೇಕು ಅಲ್ಲಿ ಮಾತ್ರ  ಕಣ್ಣುಗಳನ್ನು ತೆರೆಯುತ್ತಾರೆ, ಬೇಡದೆಡೆ ತಾತ್ಕಾಲಿಕ, ಕುರುಡನ್ನು ಪ್ರದರ್ಶಿಸುತ್ತಾರೆ.   

ಸ್ವಾತಂತ್ರ್ಯದ ಹರಣದ ಬಗ್ಗೆ ಮಾತನಾಡುವ ಜನರಿಗೆ ಈವಾನ್ ಗೊಎಥ್ ಹೇಳಿದ ಮಾತು ನೆನಪಿಗೆ ತರಬೇಕು; “ತಾವು ಎಲ್ಲರಿಗಿಂತ ಸ್ವತಂತ್ರರು ಎಂದು ಭಾವಿಸಿ ನಡೆಯುವ ಜನರಷ್ಟು ಗುಲಾಮಗಿರಿಯಲ್ಲಿ ಬಂಧಿಸಲ್ಪಟ್ಟವರು  ಬೇರಾರಿಲ್ಲ”.

“None are more hopelessly enslaved than those who falsely believe they are free.”
von Goethe

 

ಹಿಜಾಬ್ ವಿವಿಧ ಧರ್ಮಗಳಲ್ಲಿ: ಯಹೂದ್ಯರು ತಮ್ಮ ಮಹಿಳೆಯರು ಶರೀರವನ್ನು ಸಂಪೂರ್ಣವಾಗಿ ಮುಚ್ಚುವಂಥ ವಸ್ತ್ರ ಧರಿಸಲು ಉತ್ತೆಜಿಸುತ್ತಿದ್ದರು. ಕೂದಲನ್ನು ಪ್ರದರ್ಶಿಸಿ ನಡೆಯುವುದು ಅಪರಾಧ. ಉಚ್ಚ ಕುಲೀನ ಸ್ತ್ರೀಯರು ತಲೆಯ ಮೇಲೆ ಬಟ್ಟೆ ಧರಿಸುತ್ತಿದ್ದರು ಮತ್ತು ಸಮಾಜದ ಕೆಳಸ್ತರದ ಮಹಿಳೆಯರು ಪ್ರತಿಷ್ಠೆ ಗಾಗಿ ತಲೆ ಕೂದಲನ್ನು ಮುಚ್ಚುತ್ತಿದ್ದರು. ಯಹೂದ್ಯ ಸಮಾಜದಲ್ಲಿ ವೇಶ್ಯೆಯರು ತಲೆ ಕೂದಲನ್ನು ಮರೆ ಮಾಚುವಂತಿಲ್ಲ.

ಕ್ರೈಸ್ತ ಧರ್ಮದಲ್ಲಿ: ಸಂತ “ಪಾಲ್” ಹೊಸ ಒಡಂಬಡಿಕೆಯಲ್ಲಿ ಹೇಳಿದ್ದು ಹೀಗೆ: ಪ್ರತೀ ಗಂಡಿನ ತಲೆಯೂ ಕ್ರೈಸ್ತನದು ಮತ್ತು ಪ್ರತೀ ಹೆಣ್ಣಿನ ತಲೆ ಗಂಡಿನದು ಮತ್ತು ಕ್ರಿಸ್ತನ ತಲೆ ದೇವರದು. ಪ್ರತೀ ಹೆಣ್ಣು ತಲೆ ಕೂದಲನ್ನು ಮರೆ ಮಾಚಲೇ ಬೇಕು ಇಲ್ಲಾ ತಲೆ ಬೋಳಿಸಿ ಕೊಳ್ಳಬೇಕು. ಗಂಡು ತಲೆ ಕೂದಲನ್ನು ಮರೆಮಾಚೋ ಅಗತ್ಯ ಇಲ್ಲ ಏಕೆಂದರೆ ಗಂಡು ದೇವರ ಪ್ರತಿ ರೂಪ. ಆದರೆ ಹೆಣ್ಣು ಗಂಡಿನ ಗೌರವ, ಘನತೆ. ಕ್ರೈಸ್ತ ಧರ್ಮ ಗುರುಗಳ ಪ್ರಕಾರ ಹೆಣ್ಣು ತಲೆ ಕೂದಲನ್ನು ಮರೆಮಾಚುವುದು ಆಕೆ ಗಂಡಿಗೆ ಮತ್ತು ದೇವರಿಗೆ ವಿಧೇಯಳಾಗಿರಬೇಕಾದ ಕುರುಹು.  ಯಹೂದ್ಯ ಮತ್ತು ಕ್ರೈಸ್ತ ಧರ್ಮದಲ್ಲಿ ಹಿಜಾಬ್ ಗಂಡಿಗೆ ಮತ್ತು ಸಮಾಜಕ್ಕೆ ಹೆಣ್ಣು ವಿಧೇಯಳಾಗುವ ನಿಟ್ಟಿನಲ್ಲಿ ಆಗ್ರಹಿಸಿದರೆ, ಬಯಸಿದರೆ ಇಸ್ಲಾಮ್ ಹಿಜಾಬನ್ನು ಬಯಸಿದ್ದು ಹೆಣ್ಣಿನ ನಮ್ರ ನಡತೆಯನ್ನು ಉತ್ತೇಜಿಸಲು ಮತ್ತು ಪರಪುರುಷರ ಆಸಕ್ತ ಕಣ್ಣುಗಳಿಂದ ರಕ್ಷಿಸಿಕೊಳ್ಳಲು.      

 

ಕೆನಡಾದ ಕ್ವೀನ್ಸ್ ವಿಶ್ವ ವಿದ್ಯಾಲಯ ಹೊರಡಿಸಿದ ಒಂದು ಪತ್ರದಲ್ಲಿ ಈ ಆಘಾತಕಾರಿ ಅಂಶಗಳು ಒಳಗೊಂಡಿದ್ದವು.  ಪ್ರತೀ ೬ ನಿಮಿಷ ಗಳಿಗೊಮ್ಮೆ ಹೆಣ್ಣಿನ ಮೇಲೆ ಲೈಂಗಿಕ ಕಿರುಕುಳ ನಡೆಯುತ್ತದೆ;

ಪ್ರತೀ ಮೂರು ಮಹಿಳೆಯರಲ್ಲಿ ಒಬ್ಬ ಮಹಿಳೆ ತನ್ನ ಜೀವಿತ ಕಾಲದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುತ್ತಾಳೆ.

ಪ್ರತೀ ನಾಲ್ವರು ಮಹಿಳೆಯರಲ್ಲಿ ಒಬ್ಬ ಮಹಿಳೆ ತನ್ನ ಜೀವಿತ ಕಾಲದಲ್ಲಿ ಬಲಾತ್ಕಾರದ ಅಪಾಯಕ್ಕೆ ಸಿಲುಕಿರುತ್ತಾಳೆ.

ಪ್ರತೀ ಎಂಟು ಮಹಿಳೆಯರಲ್ಲಿ ಒಬ್ಬ ಮಹಿಳೆ ತನ್ನ ಕಾಲೇಜು ವ್ಯಾಸಂಗದ ವೇಳೆ ಲೈಂಗಿಕ ಶೋಷಣೆಗೆ ಒಳಪತ್ತಿರುತ್ತಾಳೆ.

ಆಧುನಿಕ ವಿಶ್ವದಲ್ಲಿ ಆಧುನಿಕ ಮನೋಭಾವದ ವ್ಯಕ್ತಿಗಳು ತಮ್ಮ ಆಧುನಿಕತೆಗೆ ವಸ್ತ್ರ ವನ್ನು ಮಾನದಂಡ ವಾಗಿರಿಸ ಕೂಡದು. ಗಂಡು ಮುಚ್ಚಿದಷ್ಟೂ gentleman ಮತ್ತು ಹೆಣ್ಣು ತೆರೆದಷ್ಟೂ cultured lady. ಈ ಮಾನ ದಂಡವನ್ನು ಎಲ್ಲರ ಮೇಲೂ ಹೇರಕೂಡದು.

ವೈಯಕ್ತಿವಾಗಿ ನಾನು ನಿಕಾಬ್ ಅಭಿಮಾನಿಯಲ್ಲ. ಬುರ್ಖಾ ಧರಿಸದೆಯೂ ಹೆಣ್ಣು ತನ್ನ ಅಂಗ ಸೌಷ್ಠವ ಪ್ರದರ್ಶಿಸದೆ ಬದುಕಬಹುದು. ಇತ್ತೀಚೆಗೆ ವಿವಾಹಿತರಾದ ಮಹೇಂದ್ರ ಸಿಂಗ್ ಧೋನಿ ಯವರ ಪತ್ನಿ ತುಂಬು ತೋಳಿನ ( full sleeved) ಚೂಡಿದಾರ್ ಧರಿಸಿ ತಲೆಯ ಮೇಲೆ ದುಪಟ್ಟಾ ಹಾಕಿಕೊಂಡು ಅಭಿನಂದಿಸಲು ಬಂದ ಜನರನ್ನು ಸ್ವೀಕರಿಸಿದರು ಎಂದು ಯಾರೋ ಹೇಳಿದರು. ಇಲ್ಲಿ ಈ ನವವಿವಾಹಿತೆ ತನಗರಿವಿಲ್ಲದೆಯೇ ಇಸ್ಲಾಮೀ ಸಂಸ್ಕೃತಿಯ ಉಡುಗೆಗೆ ಮಾರು ಹೋಗಿರಬೇಕು.       

ಈ ಲೇಖನ ಬರೆಯುತ್ತಿರುವಾಗ ನನ್ನ ಪತ್ನಿ ಕೇಳಿದಳು ಯಾವುದರ ಬಗ್ಗೆ ಬರೆಯುತ್ತಿದ್ದೀರಿ ಎಂದು. ಯೂರೋಪಿನಲ್ಲಿ ಬುರ್ಖಾ ಬ್ಯಾನ್ ಮಾಡ್ತಾರಂತೆ, ಅದರ ಬಗ್ಗೆ ಬರೆಯುತ್ತಿದ್ದೇನೆ ಎಂದೆ. ಅರ್ಥವಾಗದೆ ಕೇಳಿದಳು, ಬುರ್ಖಾ ಬ್ಯಾನ್ ಮಾಡ್ತಾರ? ಏಕೆ? ಕಾರಣ ಏನು?

ಕಾರಣ ನನಗೂ ಗೊತ್ತಿಲ್ಲ. ಕೆಲವೊಮ್ಮೆ  ಸಿಂಪಲ್ ಪ್ರಶ್ನೆಗಳಿಗೆ ಸಿಂಪಲ್ ಉತ್ತರ not so simple.