ಹಾಕಿರಣ್ಣ, ಈಕೆಗೊಂದು ಸೆಲ್ಯೂಟ್

ಅಂತಾರಾಷ್ಟ್ರೀಯ ಮಹಿಳಾ ದಿನ. ಹೆಣ್ಣುಮಗಳ ಶಕ್ತಿ ಸಾಮರ್ಥ್ಯ, ತ್ಯಾಗ ಬಲಿದಾನಗಳ ಬಗ್ಗೆ ಹಾಡಿ ಹೊಗಳಲು ಮತ್ತೊಂದು ವಿಶೇಷ ದಿನ. ದಿನಗಳ ಆಚರಣೆ ಅರ್ಥಹೀನ ನಾವು ಅದರ ಹಿಂದಿನ ಅರ್ಥ ಹುಡುಕಿ ಮಹಿಳೆಗಾಗಿ ಸಮಾನತೆಯ ಪ್ರಬಂಧ ಸೃಷ್ಟಿಸಲು ಅಸಮರ್ಥರಾದಾಗ. ಆಧುನಿಕ ಯುಗದಲಿ ಮಹಿಳೆ ಬಹಳಷ್ಟನ್ನು ಸಾಧಿಸಿದ್ದರೂ ಪ್ರಪಂಚದ ಹಲವು ಭಾಗಗಳಲ್ಲಿ ಈಗಲೂ ಆಕೆ ಕಗ್ಗತ್ತಿಲಿನಲ್ಲಿ ತಡಕಾಡುತ್ತಿದ್ದಾಳೆ. ಬಿರುದು ಬಾವಲಿ, ಸಮ್ಮಾನ ಸಂಪತ್ತಿಗಾಗಿ ಅಲ್ಲ, ದೇವರು ಹೆಣ್ಣು ಗಂಡು ಎನ್ನುವ ಬೇಧವಿಲ್ಲದೆ ಕೊಡಮಾಡಿದ ಸ್ವಾತಂತ್ರ್ಯಕ್ಕಾಗಿ.

ಮಹಿಳೆಯ ಹುಟ್ಟು ಈಗಲೂ ಕೆಲವು ಸಮಾಜಗಳಲ್ಲಿ ಅಸಮಾಧಾನ, ಅತೃಪ್ತಿ ತರುತ್ತದೆ. ಗಂಡು ಮಗುವನ್ನ ಹೆರುವುದು ಹೆಣ್ಣಿಗೆ ಪ್ರತಿಷ್ಠೆ ತಂದು ಕೊಡುತ್ತದೆ. ಗಂಡು ಮಗುವಿನ ಜನ್ಮ ಕುಟುಂಬದಲ್ಲಿ, ನೆಂಟರಿಷ್ಟರಲ್ಲಿ ಸಂತಸವನ್ನು ಹರಡುತ್ತದೆ. ಒಂದೆರಡು ಹೆಣ್ಣು ಮಕ್ಕಳಿಗೆ ಜನ್ಮ ಕೊಟ್ಟ ತಾಯಿಗೆ ನಿನ್ನ ಹೊಟ್ಟೆಯಲ್ಲಿ ದೇವರು ಗಂಡು ಮಗುವನ್ನ ಹಾಕಿಲ್ಲವೆ ಎಂದು ಮೂದಲಿಕೆ ಕೇಳಿ ಬರುತ್ತದೆ. ಗಂಡು ಸಂತಾನಕ್ಕೆ ಇರುವ ಬೇಡಿಕೆ ಕಂಡ ವೈದ್ಯಕೀಯ ಸಮೂಹ ಕೂಡಾ ಅಲ್ಟ್ರಾ ಸೌಂಡ್, ಅಬಾರ್ಶನ್ ಮೂಲಕ ಹೆಣ್ಣಿನ ಹುಟ್ಟನ್ನು ಕೊನೆಗೊಳಿಸುವ ನೀಚ ಪ್ರವೃತ್ತಿಗೆ ಸಾಕ್ಷಿ ಯಾಗುತ್ತಿದೆ.  ಗುಜರಾತಿನಲ್ಲಿ ಗಂಡು ಮಕ್ಕಳನ್ನು ಸೃಷ್ಟಿಸುವ ಕ್ಲಿನಿಕ್ ಕಾರ್ಯಾಚರಣೆಯ ಆಘಾತಕಾರಿ ಸುದ್ದಿಯ ಬಗ್ಗೆ ಇತ್ತೀಚೆಗೆ ತಾನೇ ಓದಿದ್ದೇವೆ. ಹೆಣ್ಣು ಮಗುವಿನ ಸಂತಾನ ಇಲ್ಲದಂತೆ ಮಾಡುವ ಇನ್ನೂ ಯಾವ ಯಾವ ತೆರನಾದ ಟ್ರಿಕ್ಕು ಗಳು ಅವಿತು ಕೊಂಡಿವೆಯೋ ಕುಬುದ್ಧಿ ತಲೆಗಳಲ್ಲಿ. ಅರೇಬಿಯದಲ್ಲಿ ಹುಟ್ಟುವ ಮೊದಲ ಮಗು ಹೆಣ್ಣಾದರೆ ಜೀವಂತ ಹೂಳುತ್ತಿದ್ದರಂತೆ. ಹುಟ್ಟಿದ ಹೆಣ್ಣುಮಗುವಿನ ಬಾಯೊಳಗೆ ಬೂಸಾ ಹಾಕಿ ಕೊಲ್ಲುತ್ತಿದ್ದರು ತಮಿಳು ನಾಡಿನಲ್ಲಿ. ಅರೇಬಿಯಾದ ಅನಿಷ್ಟ ಅಮಾನವೀಯ ಪದ್ಧತಿಗೆ ಪ್ರವಾದಿ ಮುಹಮ್ಮದರು ಅಂತ್ಯ ಹಾಡಿದರು. ಯಾವ ತಪ್ಪೂ ಮಾಡದ ಹೆಣ್ಣು ಹಸುಳೆ ಯನ್ನು ಯಾವ ಕಾರಣಕ್ಕಾಗಿ ಕೊಲ್ಲಲಾಯಿತು ಎಂದು ಸಮಜಾಯಿಷಿ ಕೇಳಲಾಗುವುದು ಎಂದು ದೇವರು ಪವಿತ್ರ ಕುರಾನ್ ನಲ್ಲಿ ಕಟ್ಟೆಚ್ಚರ ನೀಡುತ್ತಾನೆ. ಯಾರು ತಮಗೆ ಹೆಣ್ಣು ಮಕ್ಕಳನ್ನು ತಾರತಮ್ಯ ತೋರಿಸದೆ ಅವರ ಲಾಲನೆ ಪೋಷಣೆ ಮಾಡಿ ಸಂರಕ್ಷಿಸುವರೋ ಅವರು ಮತ್ತು ನಾನು ಸ್ವರ್ಗ ಲೋಕದಲ್ಲಿ ಇಷ್ಟು ಸಮೀಪ ಇರುತ್ತೇವೆ ಎಂದು ಪ್ರವಾದಿಗಳು ತಮ್ಮ ತೋರುಬೆರಳನ್ನು ಮತ್ತು ಮಧ್ಯದ ಬೆರಳನ್ನು ತೋರಿಸಿ ಹೇಳುತ್ತಾರೆ. ಆಸ್ತಿಯಲ್ಲಿ ಹಕ್ಕು, ವಿಚ್ಛೇದನದಲ್ಲಿ ಹಕ್ಕು, ವಿಧವೆಗೆ ಮರು ವಿವಾಹದ ಹಕ್ಕು, ವೇದ ಪಾರಾಯಣದಲ್ಲಿ ಹಕ್ಕು ಹೀಗೆ ಎಲ್ಲ ರೀತಿಯ ಹಕ್ಕುಗಳಿಗೆ ಮಹಿಳೆಯನ್ನು ಅರ್ಹಳನ್ನಾಗಿಸಿದ ಪ್ರವಾದಿಗಳು ಮಹಿಳೆಯನ್ನು ಯಾವ ರೀತಿ ನಡೆಸಿ ಕೊಳ್ಳಬೇಕು ಎಂದು ಜಗತ್ತಿಗೆ ತೋರಿಸಿ  ಒಂದು ಮಹಾ ಪರಂಪರೆಯನ್ನೇ ಹುಟ್ಟು ಹಾಕಿದರು. ದುರದೃಷ್ಟವಶಾತ್ ಈ ಹಕ್ಕುಗಳನ್ನ ಕೊಡ ಮಾಡಲು ಮುಸ್ಲಿಂ ಸಮಾಜ ಚೌಕಾಸಿ ಮಾಡುತ್ತಿರುವುದು ಖಂಡನೀಯ.

ಮದುವೆ ವಿಷಯದ ತಕರಾರಿಗೆ ಮಹಿಳೆಯೊಬ್ಬಳನ್ನು ನಗ್ನವಾಗಿ ಪರೇಡ್ ಮಾಡಲಾಯಿತು ಲಾಹೋರ್ ನಗರದಲ್ಲಿ. ಈ ತೆರನಾದ ಮಹಿಳೆ ವಿರುದ್ಧದ ಹಿಂಸೆ ನಮಗೆ ಎಲ್ಲೆಲ್ಲೂ ಕಾಣಲು ಸಿಗುತ್ತದೆ. ಈ ವಿಷಯದಲ್ಲಿ ಅತಿ ಮುಂದುವರಿದ, ಅತಿ ಹಿಂದುಳಿದ ದೇಶಗಳು ಸಮಾನತೆಯನ್ನು ಸಾಧಿಸಿವೆ. ಇಂಗ್ಲೆಂಡ್ ನಲ್ಲಿ ಪ್ರತೀ ಮೂವರು ಹೆಣ್ಣುಮಕ್ಕಳಿಗೆ ಒಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಂತೆ. ಸೂರ್ಯ ಮುಳುಗದ ಸಾಮ್ರಾಜ್ಯದ ಕಥೆ ಇದು. ಕುಡಿತ, ಜೂಜು ಮುಂತಾದ ಅನಿಷ್ಟಗಳಿಗೆ ಗುಲಾಮನಾದ ಗಂಡು ಮಹಿಳೆಯ ಮೇಲೆ ದೌರ್ಜನ್ವ ಎಸಗುತ್ತಾನೆ. ವರವ ನೀಡು ತಾಯೆ ಕುಡುಕನಲ್ಲದ ಗಂಡನ. ಈ ಮಾತಿನ ಹಿಂದೆ ಹೆಣ್ಣು ನೆಮ್ಮದಿಯ ಬದುಕು ಬಯಸುವುದು ವ್ಯಕ್ತ ವಾಗುತ್ತದೆ. ಕಾರು ಬಂಗಲೆ ಕೇಳುತ್ತಿಲ್ಲ ಆಕೆ. ಕೇವಲ ನೆಮ್ಮದಿಯ ಬದುಕು ಆಕೆಯ ಆಸೆ. 

ಗರ್ಭ ನಿರೋಧಕ ಸೌಲಭ್ಯ ಕೇಳಿದ ವಿಶ್ವ ವಿದ್ಯಾಲಯದ ಹೆಣ್ಣು ಮಗಳೊಬ್ಬಳನ್ನು ಅಮೆರಿಕೆಯ ರೇಡಿಯೋ ಬಾತ್ಮೀದಾರ “ರಷ್ ಲಿಂಬಾ” (rush limbaugh) ವೇಶ್ಯೆ ಎಂದು ಜರೆದ. ಕಾಮ ತೀಟೆ ತೀರಿಸಿ ಕೊಳ್ಳಲು ಸರಕಾರ ಭರಿಸಬೇಕಂತೆ ವೆಚ್ಚ ಎಂದು ಕೀಳು ಮಟ್ಟದ ವಾಗ್ದಾಳಿ ಮಾಡಿದ ಈ ಬಲಪಂಥೀಯ ವರದಿಗಾರ. ಇದು ಅತ್ಯಂತ ಮುಂದುವರೆದ ದೇಶವೊಂದರ ಕಥೆ. ಇಂಥ ಮಾತುಗಳನ್ನು ತಲೆ ಕೆಟ್ಟ ತಾಲಿಬಾನಿಯೂ ಆಡಿರಲಿಕ್ಕಿಲ್ಲ. ಗುಹೆಗೆಳಲ್ಲಿ ಅಡಗಿ ಕೂತು ಮಹಿಳೆಗೆ ಸ್ವಾತಂತ್ರ್ಯ ಕೊಡಲು ಒಪ್ಪದ ತಾಲಿಬಾನಿ ಬಾಯಿಂದ ಇಂಥ ಮಾತುಗಳು ಹೊರಡಲಿಲ್ಲ. ಗಗನಚುಂಬಿ ಕಟ್ಟಡಗಳ ನಾಡಿನಿಂದ ಬಂದವು ಈ ಮಾತುಗಳು. ಅದ್ಯಾವ ನಿಗೂಢ ಕಾರಣಕ್ಕೆ ಮಹಿಳೆಯನ್ನು ಗಂಡು ಶತ್ರು ಎಂದು ಪರಿಗಣಿಸುತ್ತಾನೋ ಅರ್ಥವಾಗುತ್ತಿಲ್ಲ. ಈಡನ್ ಉದ್ಯಾನವನದಲ್ಲಿ ದೇವರು  ನಿಷಿದ್ಧ ಗೊಳಿಸಿದ ಸೇಬನ್ನು ತಿನ್ನಲು ಆಡಂ ನಿಗೆ ಈವ್ ಉತ್ತೇಜಿಸಿದ ಕಾರಣ ದೇವರು ಮಹಿಳೆಗೆ ಪ್ರಸವ ವೇದನೆ ನೀಡಿದ ಎನ್ನುವ ಮತಿಹೀನರೂ ಇದ್ದಾರೆ. ಅಂದರೆ ಈ ಮಹಿಳೆ ವಿರುದ್ಧದ ಭಾವನೆಗೆ, ನಡವಳಿಕೆಗೆ ಕಾರಣ ಸಿಗುತ್ತದೆ.

ಮಹಿಳೆಯನ್ನು ಹಾಯ್, ಸೆಕ್ಸಿ ಎಂದು ಕರೆದರೆ ಸಿಕ್ಸಿಸ್ಟ್ ಆಗಬಹುದೋ ಅಥವಾ ಅದು ಒಂದು complimentary ಯೋ ಎಂದು ಒಂದು ಪತ್ರಿಕೆ ಕೇಳುತ್ತದೆ. ಮಾಧ್ಯಮಗಳು ಹೆಣ್ಣಿನ ಸೌಂದರ್ಯಕ್ಕೆ ಕೊಡುತ್ತಿರುವ ಅತೀವ ಮಹತ್ವ ಆಕೆ ತನಗರಿವಿಲ್ಲದೆಯೇ ಕೀಳರಿಮೆ ಬೆಳೆಸಿಕೊಂಡು ತೊಳಲಾಡುವಂತೆ ಮಾಡುತ್ತಿದೆ. ಅಂತರಂಗದ ಸೌಂದರ್ಯಕ್ಕೆ ಮಹತ್ವ ಮನ್ನಣೆ ಬರುವವರೆಗೆ ಈ ಕೀಳರಿಮೆಯ ಬವಣೆ ಹೆಣ್ಣಿಗೆ ತಪ್ಪದು. ಮಾಧ್ಯಮಗಳ, ಸೌಂದರ್ಯ ಪ್ರಸಾಧನ ಉತ್ಪಾದಿಸುವ ಕಂಪೆನಿಗಳ ಈ ನಡವಳಿಕೆಗೆ ದಾರಿ ಬೇರೆ ಕಾಣದೇ ತನಗರಿವಿಲ್ಲದಂತೆಯೇ ಭಾಗವಹಿಸುತ್ತಿರುವುದು ಖೇದಕರ. ಮಹಿಳೆಗೆ ಹೆಚ್ಚು ಮೈ ಪ್ರದರ್ಶನ ಮಾಡಲು ಕೊಟ್ಟ ಸ್ವಾತಂತ್ರ್ಯವೇ ನಿಜವಾದ ಸ್ವಾತಂತ್ರ್ಯ ಎಂದು ಬಗೆದ ಆಧುನಿಕ ವಿಶ್ವ ಮಹಿಳೆಯನ್ನು ಎಲ್ಲ ರೀತಿಯ ಅಪಮಾನಗಳಿಗೆ ಎಗ್ಗಿಲ್ಲದೆ ಉಪಯೋಗಿಸಿ ಕೊಂಡಿತು. ಕನಿಷ್ಠ ಉಡುಗೆ ತೊಟ್ಟು cat walk ಮಹಿಳೆಯ ಸೌಂದರ್ಯಕ್ಕೆ ಆಶ್ಚರ್ಯದಿಂದ ಹುಬ್ಬೇರಿಸಿ ಕರತಾಡನ ಮಾಡುವ ಜನ ಆಕೆ ವೇತನದಲ್ಲಿ ಸಮಾನತೆ ಬೇಡಿದಾಗ ಹುಬ್ಬು ಗಂಟಿಕ್ಕುತ್ತಾರೆ. ಹೆರಿಗೆ ವೇಳೆ ಅವಳಿಗೆ ಬೇಕಾದ ಸೌಲಭ್ಯ ಕೊಡಲು ತಕರಾರು ಮಾಡುತ್ತಾರೆ. ಗಂಡಿನಂತೆಯೇ ದುಡಿದರೂ ಅವಳ ಶ್ರಮಕ್ಕೆ ಬೆಲೆಯಿಲ್ಲ. ಹೊಲ ಗದ್ದೆಗಳಲ್ಲಿ ಕೆಲಸಮಾಡುವ, ಮನೆಗೆಲಸ ಮಾಡುವ, ತಮ್ಮದೇ ವ್ಯಾಪಾರ ಧಂಧೆ ನಡೆಸುವ, ಚಿಕ್ಕ ಪುಟ್ಟ ಕಾರ್ಖಾನೆಗಳಲ್ಲಿ ದುಡಿಯುವ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವೂ ಇಲ್ಲ, ಭದ್ರತೆಯೂ ಇಲ್ಲ. 

ಇಷ್ಟೆಲ್ಲಾ ಅಡೆ ತಡೆಗಳ ನಡುವೆಯೂ, ದೌರ್ಜನ್ಯ ಅಪಮಾನಗಳ ಮಧ್ಯೆಯೂ ಹೆಣ್ಣು ಸಾಧನೆಯ ಕಡೆ ಹೆಜ್ಜೆ ಹಾಕುತ್ತಿದ್ದಾಳೆ. ನನಗೆ ಪರಿಚಯದ ವ್ಯಕ್ತಿಯೊಬ್ಬರ ಅವಳಿ ಹೆಣ್ಣುಮಕ್ಕಳು ಗಣಕ ತಂತ್ರಜ್ಞಾನದಲ್ಲಿ ಇಂಜಿನಿಯರಿಂಗ್ ಪದವೀಧರೆಯರಾದರು. ಡಿಗ್ರೀ ಪಡೆದು ಕಾಲೇಜಿನಿಂದ ಹೊರ ಬರುತ್ತಿದ್ದಂತೆ ಒಳ್ಳೆಯ ಸಂಸ್ಥೆಯಲ್ಲಿ ಕೆಲಸವೂ ಸಿಕ್ಕಿತು. ಗ್ರಾಮ ಪ್ರದೇಶದಿಂದ, ಮುಸ್ಲಿಂ ಕುಟುಂಬದಿಂದ ಬಂದ ಈ ಹೆಣ್ಣು ಮಕ್ಕಳು ಸುತ್ತ ಮುತ್ತಲಿನವರ ಅಸಮ್ಮತಿಗೆ ಸೊಪ್ಪು ಹಾಕದೆ, ತನ್ನ ಪಾಲಕರ ಪ್ರೋತ್ಸಾಹದಿಂದ ತಮ್ಮ ಶಿಕ್ಷಣದ ಉದ್ದಕ್ಕೂ ಅತೀ ಹೆಚ್ಚು ಅಂಕಗಳನ್ನು ಗಳಿಸುತ್ತಾ ತಮ್ಮ ಕನಸನ್ನು ನನಸಾಗಿಸಿಕೊಂಡರು.

ಹೀಗೆ ಸಮಾಜದ ಕೆಂಗಣ್ಣಿಗೆ, ಕುಹಕಕ್ಕೆ ತಲೆ ಬಾಗದೆ ಮುನ್ನಡೆಯ ದೃಢವಾದ ಹೆಜ್ಜೆ ಇಡುತ್ತಿರುವ ಹೆಣ್ಣು ಮಕ್ಕಳಿಗೆ ಮಹಿಳಾ ದಿನದ ಶುಭಾಶಯಗಳು.

ಚಿತ್ರ ಕೃಪೆ: http://www.nationalgeographic.com

ತಿಳಿವಳಿಕೆಗೆ ಮತ್ತೊಂದಿಷ್ಟು ತಿಳಿಸಾರು

ಬದುಕಿನಲ್ಲಿ ಮನೆಯವರಿಂದ , ನೆಂಟರಿಂದ , ಮಿತ್ರರಿಂದ, ಸಹೋದ್ಯೋಗಿಗಳಿಂದ ಬಹಳಷ್ಟು ಕುಹಕಗಳನ್ನು, ಕಟು ಮಾತುಗಳನ್ನ ಕೇಳಿರುತ್ತೇವೆ. ನಿನ್ನ ಕೈಯ್ಯಿಂದ ಏನೇನೂ ಆಗದು, ನೀನು ದಡ್ಡ, ಮೂರ್ಖ, ಕೋಪಿಷ್ಠ, ನಿನ್ನನ್ನು ಕಂಡರೆ ಯಾರಿಗೂ ಆಗೋದಿಲ್ಲ್ಲ, ನಿನ್ನ ಮುಖ ನೋಡು, ಇನ್ನೂ ಸ್ವಲ್ಪ ಚೆನ್ನಾಗಿ, ನೋಡುವಂತಿದ್ದರೆ ಏನು ಮಾಡುತ್ತಿದ್ದೆಯೋ, ನೀನ್ಯಾಕೆ ಹೀಗೇ, ನೀನು “ಸ್ಟ್ರೇಂಜ್”,  “ವೀರ್ಡ್” ಹೀಗೇ ಸಾಗುತ್ತವೆ ಗುಣಗಾನಗಳು. ಇವನ್ನು ಒದರುವವರಿಗೆ ತಿಳಿದಿರುವುದಿಲ್ಲ ಈ ಮಾತುಗಳು ಮನಸ್ಸಿಗೆ ಮಾತ್ರವಲ್ಲ ನಮ್ಮ self worth ಮೇಲೂ ಯಾವ ಪರಿಣಾಮ ಬೀರುತ್ತವೆ ಎಂದು. ಕೆಲವರಿಗೆ ಟೀಕಿಸೋದರಲ್ಲೇ ಏನೋ ಒಂದು ಸುಖ, ನೆಮ್ಮದಿ. ಯಾರನ್ನಾದರೂ ಕಟು ಮಾತುಗಳಲ್ಲಿ ಹಳಿದ ಮೇಲೆ ಏನನ್ನೋ ಸಾಧಿಸಿದ ಹಾಗೆ. ಚೆನ್ನಾಗಿ ಉರ್ಕೊಂಡ ಎಂದು ಒಳಗೊಳಗೇ ಸಂತಸ. ಇನ್ನು ಕೆಲವರಿಗೆ ತಮ್ಮ ಕುಟುಕು ಮಾತು ಜನರಿಗೆ ನೋವುಂಟು ಮಾಡುತ್ತದೆ ಎನ್ನುವ ಪರಿವೆಯೂ ಇರುವುದಿಲ್ಲ. ಚೆನ್ನಾಗಿ ಬೊಗಳಿದ ನಂತರ ಬಾಲವನ್ನು ಕುಂಡೆ ಯಡಿಗೆ ಸೇರಿಸಿ ನಡೆಯುವ ನಾಯಿಯಂತೆ ಜಾಗ ಖಾಲಿ ಮಾಡುತ್ತಾರೆ.  

ಇಂಥ ತಿಳಿಗೇಡಿಗಳು, ಮತಿಹೀನರು, ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಳ್ಳದೆ ಇರುವುದೂ ಕೆಲವೊಮ್ಮೆ ಅಸಾಧ್ಯವೇ. ಹಾಗಾದ್ರೆ ಕೊರಗಿ ಕೊರಗಿ ಮನಸ್ಸು ಕೆಡಿಸಿಕೊಳ್ಳ ಬೇಕೋ? ಬೇಡ, ಅಂಥ ವ್ಯಕ್ತಿಗಳ ಸಹವಾಸವನ್ನು ನಿಲ್ಲಿಸುವುದು ಅಥವಾ ಕಡಿಮೆ ಮಾಡುವುದು ಮೊದಲನೆಯದಾಗಿ ಮಾಡಬೇಕಾದ ಕೆಲಸ. ಸ್ವತಃ ಮನೆಯವರೇ ಆದರೆ? ಅವರಿಗೆ ತಿಳಿ ಹೇಳೋದು ಕಷ್ಟವಾದರೂ ಜಾಣ್ಮೆಯಿಂದ, ನಾಜೂಕಿನಿಂದ ವಿವರಿಸಬೇಕು. ಆದರೆ ಆಗೊಮ್ಮೆ ಈಗೊಮ್ಮೆ ಸನ್ನಡತೆಯ, ಸ್ವೀಟ್ ನೇಚರ್ ನ ಜನರನ್ನೂ ನಾವು ಕಾಣುತ್ತೇವೆ. ಮುಕ್ತ ಕಂಠದಿಂದ ಹೊಗಳುವ, ಮೆಚ್ಚುಗೆ ವ್ಯಕ್ತಪಡಿಸುವ, ಒಳ್ಳೆಯ ಮಾತನ್ನಾಡುವ, ನಮ್ಮ ಮೇಲೆ ನಮಗೇ ಅಭಿಮಾನ ಮೂಡುವಂತೆ  ಮಾಡುವ ಜನರೂ ಇಲ್ಲದ್ದಿಲ್ಲ. ಅಂಥವರ ಸಹವಾಸ ಮನಸ್ಸಿಗೆ ಮುದ ನೀಡುತ್ತದೆ, ಅಂಥವರು ಆದರ್ಶ ಸಂಗಾತಿಗಳು. ಒಬ್ಬ ವ್ಯಕ್ತಿ ವ್ಯಾಯಾಮ ನಿರತನಾಗಿದ್ದಾಗ ಅವನ ಲಾಕರ್ ನಲ್ಲಿ ಅವನ ಸ್ನೇಹಿತ ಒಂದು ಚಿಕ್ಕ ಚೀಟಿಯನ್ನು ಇಟ್ಟು ಹೋಗಿರುತ್ತಾನೆ, ತೆರೆದು ನೋಡಿದಾಗ ಅದರಲ್ಲಿ ಹೀಗೇ ಬರೆದಿರುತ್ತದೆ;

“ಯಾವುದನ್ನೂ ಮನಸ್ಸಿಗೆ ಹಚ್ಚಿಕೊಂಡು ಕೊರಗಬೇಡ, ನೀನು ಜ್ಞಾನದಲ್ಲಾಗಲಿ, ಅನುಭವದಲ್ಲಾಗಲಿ ಕಡಿಮೆಯಲ್ಲ. ನೀನು ನಿಷ್ಠುರವಾಗಿ ಮಾತನಾಡಿದರೂ ಸತ್ಯವನ್ನೇ ನುಡಿಯುವೆ, ಕ್ರಿಯಾಶೀಲತೆ ಇದೆ ನಿನ್ನಲ್ಲಿ, ನೀನು ಮಾತಿಗೆ ತಪ್ಪುವವನಲ್ಲ, ನಿನ್ನಿಂದಾದ ಸಹಾಯ ಮಾಡಲು ನೀನು ಯಾವಾಗಲೂ ತಯಾರು. ನಿನ್ನದು ನಿನಗೇ ತಿಳಿಯದಷ್ಟು ಉನ್ನತ ಮೌಲ್ಯಗಳುಳ್ಳ ವ್ಯಕ್ತಿತ್ವ, ಇಂದಲ್ಲ ನಾಳೆ ಯಶಸ್ಸು ನಿನ್ನನ್ನು ಹುಡುಕಿಕೊಂಡು ಬಂದೆ ಬರುತ್ತದೆ”. ನಾವೆಂದಾದರೂ ನೊಂದ ಆತ್ಮಗಳಿಗೆ ಇಂಥ ಸಾಂತ್ವನದ ನುಡಿಗಳನ್ನು ಹೇಳಿದ್ದೇವೆಯೇ, ಬರೆದಿದ್ದೇವೆಯೇ?