೨೦೧೧… ಹೀಗಿತ್ತು !

ವರ್ಷಗಳು ಉರುಳುವುದೇ ಅರಿವಾಗುವುದಿಲ್ಲ. ಅಷ್ಟು ಸಲೀಸಾಗಿ ಮಾಯವಾಗಿ ಬಿಡುತ್ತವೆ.ಮತ್ತೊಂದು ವರ್ಷ ಚರಿತ್ರೆ ಸೇರಿಕೊಂಡಿತು. ಹೊಸ ವರ್ಷವನ್ನು ಸ್ವಾಗತಿಸುವ ಮತ್ತು ಸಿಗರೇಟ್ ಬಿಡುತ್ತೇನೆ, ವಾಕ್ ಮಾಡುತ್ತೇನೆ ಎನ್ನುವ ನಿರ್ಣಯಗಳ ಮಧ್ಯೆ ಸ್ವಲ್ಪ ಬಿಡುವು ಮಾಡಿಕೊಂಡು ಸಂದು ಹೋದ ವರ್ಷ ನಮಗೆ ನೀಡಿದ ಹರ್ಷ, ಭರವಸೆ ಮತ್ತು ದುಃಖ ದುಮ್ಮಾನಗಳ ಕುರಿತು ಸ್ವಲ್ಪ ಓದಿ.

ಈ ವರ್ಷ ಸರ್ವಾಧಿಕಾರದ ಉಸಿರು ಗಟ್ಟಿಸುವ ವಾತಾವರಣದಿಂದ ಕೆಲವು ದೇಶಗಳ ಜನರಿಗೆ ಮುಕ್ತಿ ಸಿಕ್ಕಿದರೆ ತಮ್ಮ ಬದುಕಿನಲ್ಲಿ ಅಮೋಘವಾದದ್ದನ್ನು ಸಾಧಿಸಿ ಸಾರ್ಥಕ ಬದುಕು ಸಾಗಿಸಿ ಕಣ್ಮರೆಯಾದ ಚೇತನಗಳು ಹಲವು.

ಉತ್ತರ ಆಫ್ರಿಕಾದ ಪುಟ್ಟ ದೇಶ ಟುನೀಸಿಯಾದಲ್ಲಿ ಅರಬ್ ಕ್ರಾಂತಿ. “ಅರಬ್ ವಸಂತ” ಎಂದು ಬಣ್ಣಿಸಲ್ಪಟ್ಟ ಈ ಕ್ರಾಂತಿ ೨೩ ವರ್ಷಗಳ ಕಾಲ ಸುದೀರ್ಘ ಆಡಳಿತ ನಡೆಸಿದ ಜೈನುಲ್ ಆಬಿದೀನ್ ರ ಕುರ್ಚಿ ಪಲ್ಲಟ ಮಾಡಿತು. ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿ ಜನಸಾಮಾನ್ಯರನ್ನು ಬಾಧಿಸಿತು. ಲಂಚಗುಳಿತನದಿಂದ ಬೇಸತ್ತ ನಿರೋದ್ಯೋಗಿ ಯುವಕ “ಮುಹಮ್ಮದ್ ಬೂ ಅಜೀಜಿ” ಆತ್ಮಹತ್ಯೆ ಮಾಡಿಕೊಂಡಾಗ ಬಂತು ಸರಕಾರಕ್ಕೆ ಸಂಚಕಾರ. ಜನ ಸಿಡಿದೆದ್ದರು, ಪ್ರದರ್ಶನಗಳು ನಡೆದವು. ಅಲ್ಲಿನ ಅಧ್ಯಕ್ಷನ ಯಾವ ಸಾಂತ್ವನದ ಮಾತುಗಳೂ ಜನರ ಆಕ್ರೋಶ ತಣಿಸಲು ವಿಫಲವಾದವು. ದಾರಿಗಾಣದೆ ಆಬಿದೀನ್ ದೇಶ ಬಿಟ್ಟು ಓಡಿದ. ಟುನೀಸಿಯಾ ಸರಕಾರ ಪತನವಾಗುತ್ತಿದಂತೆಯೇ ಈಜಿಪ್ಟ್, ಲಿಬಿಯಾ, ಸಿರಿಯಾ, ಯೆಮೆನ್, ಬಹರೇನ್, ದೇಶಗಳಿಗೂ ಕಾಲಿಟ್ಟಿತು ಅರಬ್ ವಸಂತ. ಮೂರು ದಶಕಗಳ ಕಾಲ ಈಜಿಪ್ಟ್ ದೇಶವನ್ನು ಆಳಿದ ಮುಬಾರಕ್ ಕೊನೆಗೂ ಅಧಿಕಾರ ತ್ಯಜಿಸಿದ. ರಕ್ತದ ಕೊನೇ ತೊಟ್ಟಿನ ವರೆಗೂ ಹೋರಾಡುವೆ ಎಂದ ಬಲಿಷ್ಠ ಮುಅಮ್ಮರ್  ಗದ್ದಾಫಿ ಕ್ರಾಂತಿಕಾರಿಗಳ ಕೈಗೆ ಸಿಕ್ಕಿ ಬಿದ್ದು ಹತನಾದ. ಲಿಬ್ಯಾ ವಸಂತದ ಸಂಭ್ರಮದ ಕುಣಿತ ಕಂಡಿತು. ಅರಬರಿಗೆ ಸ್ವಾತಂತ್ರ್ಯ ಎಂದರೇನು ಎಂದು ಗೊತ್ತಿಲ್ಲ ಎಂದು ಮೂಗು ಮುರಿಯುತ್ತಿದ್ದ ವಿಶ್ವ ಅರಬರ ಸ್ವಾತಂತ್ರ್ಯಕ್ಕಾಗಿನ ತುಡಿತ ನೋಡಿ ಮೂಗಿನ ಮೇಲೆ ಬೆರಳಿಟ್ಟು ಕೊಂಡಿತು.

ಅರಬ್ ದೇಶಗಳ ಈ ರಾಜಕೀಯ ವಿದ್ಯಮಾನಗಳಿಗೆ ಒತ್ತು ಕೊಟ್ಟ, ಕುಮ್ಮಕ್ಕು ನೀಡಿದ ಸಾಮಾಜಿಕ ತಾಣಗಳಾದ ಫೇಸ್ ಬುಕ್, ಟ್ವಿಟ್ಟರ್, ಯೂ ಟ್ಯೂಬ್ ಗಳು ರಾರಾಜಿಸಿದವು. ಸಾಮಾನ್ಯವಾಗಿ ತಂತ್ರಜ್ಞಾನ ಉಳ್ಳವರ ಸೊತ್ತು. ಆದರೆ ಸಾಮಾಜಿಕ ತಾಣಗಳು ಈ ಅಸಮಾನತೆಯನ್ನು ಅಮೋಘವಾಗಿ ಹೋಗಲಾಡಿಸಿದವು.  ಕಂಪ್ಯೂಟರ್ ತಂತ್ರಜ್ಞಾನ ಜನರನ್ನು ದಾಸ್ಯದ ಸಂಕೋಲೆಯಿಂದ ಹೊರಬರಲು ದೊಡ್ಡ ರೀತಿಯಲ್ಲಿ ಸಹಾಯ ಮಾಡಿತು.  

ಎರಡನೇ ವಿಶ್ವ ಯುದ್ಧದಲ್ಲಿ ಅಮೆರಿಕೆಯ ಕೆಂಗಣ್ಣಿಗೆ ಸಿಕ್ಕು ನುಚ್ಚು ನೂರಾದ ಜಪಾನ್ ಪ್ರಕೃತಿಯ ವಿಕೋಪಕ್ಕೆ ತುತ್ತಾಯಿತು ಮಾರ್ಚ್ ೨೦೧೧ ರಲ್ಲಿ. ತ್ಸುನಾಮಿ ಅಲೆಗಳು ಜಪಾನ್ ದ್ವೀಪವನ್ನು ನಿರ್ದಯವಾಗಿ ಗುಡಿಸಿ ಹಾಕಿತು. ೧೬,೦೦೦ ಕ್ಕೂ ಮಿಕ್ಕು ಜನ ಸತ್ತರು. ನಿಸರ್ಗ ತಮ್ಮ ಮೇಲೆ ಈ ರೀತಿ ಎರಗಿ ಬಂದರೂ ಧೃತಿಗೆಡದೆ, ದುರಾದೃಷ್ಟವನ್ನು ಶಪಿಸದೆ, ಜಪಾನೀಯರು ತಾಳ್ಮೆಯಿಂದ ಅಳಿದುಳಿದುದನ್ನು ಹೆಕ್ಕಿ ತಮ್ಮ ಬದುಕಿನ ಮರುನಿರ್ಮಾಣದ ಕಡೆ ಗಮನ ನೆಟ್ಟರು.   

ಮುಪ್ಪಿನೊಂದಿಗೆ ಶೃಂಗಾರ ಚಟುವಟಿಗಳು ಸಾಮಾನ್ಯವಾಗಿ ಕೊನೆಯಾಗುತ್ತವೆ ಅಥವಾ ಹಂಪ್ ಗಳನ್ನು ದಾಟುವ ವಾಹನಗಳಂತೆ ನಿಧಾನವಾಗುತ್ತವೆ. ಆದರೆ ಚಿರ ರಸಿಕ ಇಟಲಿಯ ಪ್ರಧಾನಿ ಸಿಲ್ವಿಯೋ ಬೆರ್ಲಸ್ಕೊನಿ ಯ ಹಾರ್ಮೋನುಗಳು ಯುವಜನರನ್ನು ನಾಚಿಸುತ್ತವೆ. ಉರುಳುವ ವರ್ಷಗಳು ಪಂಚಾಂಗಕ್ಕೆ ಮಾತ್ರ ಸೀಮಿತ, ತನ್ನ ಲೈಂಗಿಕ ಚಪಲಕ್ಕಲ್ಲ ಎಂದು ಹದಿ ಹರೆಯದ ಪೋರಿಯರೊಂದಿಗೆ ಸಲ್ಲಾಪ ಆಡಿ ಕಷ್ಟಕ್ಕೆ ಸಿಕ್ಕಿಕೊಂಡ ಪ್ರಧಾನಿ. ಲೈಂಗಿಕ ಹಗರಣಕ್ಕೆ ಬಲಿಯಾಗದೆ ಅಚ್ಚರಿದಾಯಕವಾಗಿ ಬದುಕುಳಿದ ಬೆರ್ಲೋ ಅಧಿಕಾರ ತ್ಯಜಿಸಿದ್ದು ಆರ್ಥಿಕ ಸಮಸ್ಯೆ ಕಾರಣ.

ಏಪ್ರಿಲ್ ತಿಂಗಳ ಮೊದಲ ದಿನ ಮೂರ್ಖರ ದಿನ. ಕೇಂದ್ರ ಸರಕಾರ ಭ್ರಷ್ಟಾಚಾರದ ಮೂಲಕ ಲಂಗು ಲಗಾಮಿಲ್ಲದೆ ದೇಶವನ್ನು ಒಂದು ಮೂರ್ಖರ ಸಂತೆ ರೀತಿ ನಡೆಸಿ ಕೊಳ್ಳಲು ತೊಡಗಿದಾಗ ಸಿಡಿದೆದ್ದರು “ಇಳಿ ಚೇತನ” ಅಣ್ಣಾ ಹಜಾರೆ. ತನ್ನ ಸ್ವ ಪ್ರಯತ್ನದಿಂದ ಮಹಾರಾಷ್ಟ್ರದ ಹಳ್ಳಿಯೊಂದನ್ನು ಅಭಿವೃದ್ಧಿ ಗೊಳಿಸಿದ ಈ ಸ್ವಾತಂತ್ರ್ಯ ಹೋರಾಟಗಾರ ದಿಲ್ಲಿಯಿಂದ ಹಿಡಿದು ಹಳ್ಳಿಯವರೆಗೂ ಆವರಿಸಿಕೊಂಡ ಲಂಚಗುಳಿತನವನ್ನು ಇಲ್ಲವಾಗಿಸಲು ಉಪವಾಸ ಸತ್ಯಾಗ್ರಹ ಶುರು ಮಾಡಿದರು. ಐದು ಸಾವಿರ ಮೈಲು ದೂರದಿಂದ ವ್ಯಾಪಾರಕ್ಕೆ ಎಂದು ಬಂದು ನಮ್ಮನ್ನು ಒದ್ದು, ದಬ್ಬಾಳಿಕೆಯಿಂದ ಆಡಳಿತ ನಡೆಸಿದ ಪರದೇಸೀ ಬ್ರಿಟಿಷರೂ ಉಪವಾಸ ಸತ್ಯಾಗ್ರಹಕ್ಕೆ ಮಣಿದರು. ಆದರೆ ನಮ್ಮ ದೇಸೀ ನಾಯಕರು ಜಪ್ಪಯ್ಯ ಎನ್ನಲಿಲ್ಲ. ಬ್ರಿಟಿಷರಿಗಿದ್ದ ನಾಚಿಕೆ, ಔದಾರ್ಯ ಇವ್ಯಾವುವೂ ನಮ್ಮ ನಾಯಕರಲ್ಲಿ ಕಾಣದಾಯಿತು. ಅಣ್ಣಾರವರ ಆಂದೋಲನವನ್ನು  ಮೊದ ಮೊದಲು ಅವಗಣನೆ ಮಾಡಿ ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು ಎಂದು ಭಯ ಬಿದ್ದು ಲೋಕಪಾಲ್ ಮಸೂದೆಗೆ ಒಪ್ಪುವ ನಾಟಕ ಆಡಿ ಅಣ್ಣಾ ರಿಗೆ ಸೊಗಸಾಗಿ ನಾಮ ಬಳಿದರು. ಅದೂ ಸಾಲದು ಎಂಬಂತೆ ಅಣ್ಣಾ ಜೊತೆ ವೇದಿಕೆಯಲ್ಲಿರುವವರ ಪೂರ್ವಾಪರ ಚರಿತ್ರೆ ತೆಗೆದು ಅಣ್ಣಾ ದೇಶ ಎಣಿಸಿದ ಮುಗ್ಧ ಅಣ್ಣಾ ಅಲ್ಲ, ಆರೆಸ್ಸೆಸ್ ಏಜೆಂಟ್ ಎಂದು ಪ್ರಚಾರ ಮಾಡಿ ಲಂಚದ ವಿರುದ್ಧದ ಅಂದೋಲನದ ದಿಕ್ಕನ್ನೇ ದಿಕ್ಕಾ ಪಾಲು ಮಾಡಿತು ಕೇಂದ್ರ ಸರಕಾರ. ತುನೀಸಿಯಾದ ಬೂ ಅಜೀಜಿ ಯ ಆತ್ಮ ಹತ್ಯೆ ಮತ್ತು ಜನರ ಪ್ರತಿಭಟನೆಗೆ ಅಲ್ಲಿನ ಅಧ್ಯಕ್ಷ ಲಂಚಗುಳಿಯಾದರೂ, ಮರ್ಯಾದಸ್ಥನಂತೆ ತಲೆ ಬಾಗಿ ಹೊರನಡೆದ.  ನಮ್ಮಲ್ಲಿ ಹಾಗಾಗಲಿಲ್ಲ. ನಮ್ಮ ಕೇಂದ್ರ ಸರಕಾರಕ್ಕೆ ತಲೆ ಇದ್ದರಲ್ಲವೇ ಬಾಗುವ ಪ್ರಶ್ನೆ ಏಳೋದು.          

ನಾರ್ವೆ ದೇಶದಲ್ಲಿ ನರಸಂಹಾರ: ನೈಸರ್ಗಿಕ ಸಂಪನ್ಮೂಲಗಳಿಂದ ಶ್ರೀಮಂತವಾದ ಅಇರೋಪ್ಯ ಖಂಡದ “ನಾರ್ವೆ” ಪುಟ್ಟ ದೇಶ. ಇಲ್ಲಿನ ಸಾಲ್ಮನ್ ಜಾತಿಯ ಮೀನು ಜಗತ್ಪ್ರಸಿದ್ಧ. ಸಾಲ್ಮನ್ ಮೀನು ಹೃದಯಕ್ಕೆ ತುಂಬಾ ಒಳ್ಳೆಯದಂತೆ. land of midnight sun ಎಂದೂ ಅರಿಯಲ್ಪಡುವ ಈ ದೇಶದಲ್ಲಿ ವರ್ಷದ ಕೆಲವೊಂದು ತಿಂಗಳು ಸೂರ್ಯ ಮಧ್ಯ ರಾತ್ರಿ ಉದಯಿಸುತ್ತಾನೆ. ೩೨ ವರ್ಷ ಪ್ರಾಯದ ಸುಂದರ ಯುವಕ ‘ಆಂಡರ್ಸ್ ಬೆಹ್ರಿಂಗ್ ಬ್ರೆವಿಕ್’ ಪ್ರಶಾಂತ ನಾರ್ವೆ ದೇಶವನ್ನು ಶೋಕ ಸಾಗರದಲ್ಲಿ ಮುಳುಗಿಸಿದ ತನ್ನ ನಿರ್ದಯೀ ಹಿಂಸೆಯ ಮೂಲಕ. ರಾಜಧಾನಿ ಓಸ್ಲೋ ನಗರದಲ್ಲಿ ಬಾಂಬಿಟ್ಟು ನಗರದ ಸಮೀಪದಲ್ಲೇ ಇದ್ದ ದ್ವೀಪಕ್ಕೆ ಹೋಗಿ ಅಲ್ಲಿ ನೆರೆದಿದ್ದ ನೂರಾರು ಜನರ ಮೇಲೆ ಎರ್ರಾಬಿರ್ರಿ ಗುಂಡು ಹಾರಿಸಿ ೮೦ ಕ್ಕೂ ಹೆಚ್ಚು ಜನರನ್ನು ಕೊಂದ. ಕ್ರೈಸ್ತ ಮೂಲಭೂತವಾದಿಯಾಗಿದ್ದ ಈತನ ಕ್ರೌರ್ಯಕ್ಕೆ ವಿಶ್ವ ಬೆಚ್ಚಿತು, ರಾತ್ರಿ ಉದಯಿಸುತ್ತಿದ್ದ ಸೂರ್ಯ ಹಾಡು ಹಗಲೇ ಅಸ್ತಮಿಸಿದ ಇವನ ಕ್ರೌರ್ಯಕ್ಕೆ ಬೆಚ್ಚಿ.  

ಯಾವುದೇ ಕಾರಣವಿಲ್ಲದೆ ಇರಾಕಿನ ಮೇಲೆ ಧಾಳಿ ಮಾಡಿ, ಆ ದೇಶವನ್ನು ಆಕ್ರಮಿಸಿಕೊಂಡು ಎರಡು ದಶಲಕ್ಷಕ್ಕೂ ಜನರನ್ನು ಕೊಂದ ಅಮೇರಿಕಾ ತನ್ನ ಸೈನ್ಯ ಹಿಂದಕ್ಕೆ ಕರೆಸಿಕೊಳ್ಳಲು ಕೊನೆಗೂ ತೀರ್ಮಾನಿಸಿತು. ಇರಾಕಿನ ಮೇಲಿನ ಯುದ್ಧ ಯಾವ ರೀತಿ ಅಮೇರಿಕಾ, ಇಂಗ್ಲೆಂಡ್ ನಂಥ ಬಲಿಷ್ಠ ದೇಶಗಳು ಜನರ ಕಣ್ಣಿಗೆ ಬೂದಿ ಎರಚಿ ತಮ್ಮ ಸ್ವಾರ್ಥ ಸಾಧಿಸಲು ತಯಾರು ಎನ್ನುವುದಕ್ಕೆ ಇರಾಕ್ ಜ್ವಲಂತ ನಿದರ್ಶನವಾಯಿತು.

ಆಫ್ರಿಕಾ ಖಂಡದ ಸುಡಾನ್ ದೇಶದಿಂದ ದಕ್ಷಿಣ ಸುಡಾನ್ ಎನ್ನುವ ದೇಶ ಪ್ರತ್ಯೇಕಗೊಂಡು ಸ್ವಾತಂತ್ರ್ಯವಾಯಿತು. 

೨೦೧೧ ರ ನೊಬೆಲ್ ಶಾಂತಿ ಪುರಸ್ಕಾರ ಈ ಸಲ ಮೂರು ಮಹಿಳೆಯರು ಹಂಚಿಕೊಂಡರು. ಸ್ವಾತಂತ್ರ್ಯ, ಸೌಹಾರ್ದ, ಮತ್ತು ಲಿಂಗ ಬೇಧ ನಿವಾರಣೆಗೆ ಶ್ರಮಿಸಿದ ಈ ಮಹಿಳೆಯರಲ್ಲಿ ಇಬ್ಬರು ಆಫ್ರಿಕಾ ಖಂಡದ ಲೈಬೀರಿಯ ದೇಶದವರು, ಮತ್ತೊಬ್ಬರು ಅರಬ್ ಪ್ರಾಂತ್ಯದ ಯೆಮೆನ್ ದೇಶದವರು. ಸಾಂಪ್ರದಾಯಿಕ ಅರಬ್ ಮುಸ್ಲಿಂ  ಸಮಾಜದಿಂದ ಬಂದ “ತವಕ್ಕುಲ್ ಕರ್ಮಾನ್” ಯಾವ ತೊಡಕುಗಳಿಗೂ ಅಂಜದೆ ತನ್ನ ದೇಶದ ಸರ್ವಾಧಿಕಾರಿಯನ್ನು ಧೈರ್ಯವಾಗಿ ಎದುರಿಸಿ ಯಶಸ್ವಿಯಾದರು. ಮಹಿಳೆ ಧೈರ್ಯವಾಗಿ ಮುನ್ನುಗ್ಗಿದರೆ ಯಾವ ಮೂಲಭೂತವಾದಿಗಳಾಗಲೀ, ಸಮಾಜದ ಯಾವ ನಿರ್ಬಂಧಗಳೇ ಆಗಲಿ ಲೆಕ್ಕಕ್ಕೆ ಬರದು ಎಂದು ವಿಶ್ವಕ್ಕೆ ಸಾರಿದ ೩೨ ರ ಹರೆಯದ ತವಕ್ಕುಲ್ ನೊಬೆಲ್ ಪ್ರಶಸ್ತಿ ಪಡೆದ ಎರಡನೇ ಮುಸ್ಲಿಂ ಮಹಿಳೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಇರಾನಿನ ಶಿರೀನ ಇಬಾದಿ ನೊಬೆಲ್ (೨೦೦೩) ವಿಜೇತ ಮತ್ತೊಬ್ಬ ಮಹಿಳೆ.   

ಈ ಸಲದ ಪುರಸ್ಕಾರ ಅರಬ್ ವಿಶ್ವದಲ್ಲಿ ಸ್ವಾತಂತ್ರ್ಯದ ಕಹಳೆ ಮೊಳಗಿಸಿದ ಬ್ಲಾಗಿಗಳಿಗೆ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಸ್ವಾತಂತ್ರ್ಯದೊಂದಿಗೆ ಸಮಾನತೆಯ ಕಹಳೆ ಮೊಳಗಿಸಿದ ಧೀರ ಮಹಿಳೆಯರ ಪಾಲಾಯಿತು ನೊಬೆಲ್.  

ಕಾಲನ ಕರೆಗೆ ವಿಧೇಯರಾಗಿ ಓಗೊಟ್ಟು ಕಣ್ಮರೆಯಾದವರು

ವಿವಾದಾಸ್ಪದ ಕಲಾವಿದ ಮಕ್ಬೂಲ್ ಫಿದಾ ಹುಸೇನ್ ನಿಧನ. ಹುಸೇನರ ಕುಂಚಗಳು ತನ್ನ canvas ಗಡಿ ಮೀರಿ ಜನರ ನಂಬಿಕೆಗಳ ಮೇಲೆ ಹರಿದಾಡ ತೊಡಗಿಡಾಗ ಗಡೀ ಪಾರಾಗಬೇಕಾಯಿತು. ಕತಾರ್ ದೇಶದ ಪೌರತ್ವ ಪಡೆದರೂ ಮಾತೃ ಭೂಮಿಗಾಗಿ ಮಿಡಿಯಿತು ಹುಸೇನ್ ಮನ. ಹುಸೇನ್ ಅಂತ್ಯ ಲಂಡನ್ನಿನಲ್ಲಿ. ಹುಸೇನ್ ಮರಣಕ್ಕೆ ಪ್ರಧಾನಿ, ರಾಷ್ಟ್ರಪತಿ ಶೋಕ. ಹುಸೇನ್ ಸಾವು ರಾಷ್ಟ್ರೀಯ ನಷ್ಟ ಎಂದು ಪ್ರಧಾನಿ ಹೇಳಿದರೆ, ರಾಷ್ಟ್ರಪತಿ ಗಳು ಹೇಳಿದ್ದು ಹುಸೇನ್ ಇಲ್ಲದ ಕಲೆ ಶೂನ್ಯ ಎಂದು.

ವಿಶ್ವದ ಕುಖ್ಯಾತ ಭಯೋತ್ಪಾದಕ ಬಿನ್ ಲಾದೆನ್. ಅಮೆರಿಕೆಯ to do list ನಲ್ಲಿ ಆಗ್ರ ಪಂಕ್ತಿಯಲ್ಲಿದ್ದ ಲಾದೆನ್ ನ ಅವಸಾನ ಕೊನೆಗೂ ಕೈಗೂಡಿತು. ಪಾಕ್ ರಾಜಧಾನಿಯ ಸಮೀಪದ ಅಬೋಟ್ಟಾ ಬಾದ್ ನಲ್ಲಿ ಅಡಗಿ ಕೂತಿದ್ದ ಬಿನ್ ಲಾದೆನ್ ನನ್ನು ಅಮೆರಿಕೆಯ ಅತಿ ಪ್ರತಿಷ್ಠಿತ ಕಮಾಂಡೋ ಪಡೆ “ಸೀಲ್” ಬೇಟೆಯಾಡಿ ಅಮೇರಿಕಾ ನಿರಾಳ ಭಾವ ಅನುಭವಿಸುವಂತೆ ಮಾಡಿತು. ಬಿನ್ ಲಾದೆನ್ ಸಾವಿನ ಸುದ್ದಿ ವಿಶ್ವ ಪುರಾವೆ ಬಯಸಿದಾಗ ಅಮೇರಿಕಾ ಹೇಳಿದ್ದು, ಪ್ರದರ್ಶಿಸಲು ಪಾರಿತೋಷಕ ಅಲ್ಲ ನಮಗೆ ಸಿಕ್ಕಿದ್ದು, ನಾವು ಹೇಳಿದ್ದನ್ನು ನಂಬಿ ಎಂದು. ಸಾವಿರಾರು ಜನರ ಭವಿಷ್ಯವನ್ನು ಭೂ ಸಮಾಧಿ ಮಾಡಿದ್ದ ಬಿನ್ ಲಾದೆನ್ ಗೆ ಸತ್ತಾಗ ಸಿಕ್ಕಿದ್ದು ಜಲಸಮಾಧಿ.  

ಕಂಪ್ಯೂಟರ್ ಎಂದರೆ ಆಕರ್ಷಣೆ ಇಲ್ಲದ ಒಂದು bland ಉಪಕರಣ ಅಲ್ಲ, ಅದು ಒಂದು ಮೋಜನ್ನು, ನೀಡುವ ಆಕರ್ಷಕ ಉಪಕರಣ ಎಂದು ಜಗತ್ತಿಗೆ ತೋರಿಸಿದ “ಆಪಲ್” ನ ಒಡೆಯ ಸ್ಟೀವ್ ಜಾಬ್ಸ್  ಯಕೃತ್ತಿನ ಕ್ಯಾನ್ಸರ್ ಗೆ ಬಲಿಯಾದ. ತಂತ್ರಜ್ಞಾನ ಬಡವಾಯಿತು ಎಂದು ಶೋಕಿಸಿದರು ಟೆಕ್ಕಿಗಳು.

ಭಾರತೀಯ ಕ್ರಿಕೆಟ್ ನ ಗತಕಾಲದ ಹೀರೋ ಮನ್ಸೂರ್ ಅಲಿ ಖಾನ್ ಪಟೌಡಿ ನಿಧನದಿಂದ ಕ್ರಿಕೆಟ್ ಆಟ ತನ್ನ ಹೊಳಪನ್ನು ಕಳೆದು ಕೊಂಡಿತು. ಟೈಗರ್ ಎಂದು ಕರೆಯಲ್ಪಡುತ್ತಿದ್ದ ಈ ಸ್ಫುರದ್ರೂಪಿ “ಪಟೌಡಿ” ಪ್ರಾಂತ್ಯದ “ನವಾಬ್’ ಭಾರತದ ಯಶಸ್ವೀ ನಾಯಕರಲ್ಲೊಬ್ಬರು. ಅಂದಿನ ಪ್ರಸಿದ್ಧ ನಟಿ ಶರ್ಮಿಳಾ ಟಾಗೋರ್ ರನ್ನು ವರಿಸಿದ ಪಟೌಡಿ ಕ್ರಿಕೆಟ್ ಆಟಕ್ಕೆ ಗ್ಲಾಮರ್ ತಂದು ಕೊಟ್ಟವರು. ಪಟೌಡಿ ನಿಧನರಾದಾಗ ವಯಸ್ಸು ೭೦.

ಭೀಂ ಸೇನ್ ಜೋಶಿ, ಭಜನ್ ಲಾಲ್, ಭೂಪೇನ್ ಹಜಾರಿಕಾ, ಅಂಬಿಕಾ ಚೌಧುರಿ, ಚಿತ್ರನಟ ದೇವ್ ಆನಂದ್, ಶಮ್ಮಿ ಕಪೂರ್, ಸತ್ಯಸಾಯಿ ಬಾಬ, ಅರ್ಜುನ್ ಸಿಂಗ್ ಇತರೆ ಗಣ್ಯರು ಅಗಲಿದವರು.  

ನಮ್ಮ ರಾಜ್ಯದ ವರ್ಣರಂಜಿತ ವ್ಯಕ್ತಿತ್ವ ಕಣ್ಮರೆ. ಎಸ್, ಬಂಗಾರಪ್ಪ ಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಸಂಸದರಾಗಿ ರಾಜಕೀಯ ಕ್ಷೇತ್ರದಲ್ಲಿ ದುಡಿದವರು. ಒಂದು ಕಾಲದಲ್ಲಿ ನಾನು ಅವರ ಅಭಿಮಾನಿ. ಪಕ್ಷದಿಂದ ಪಕ್ಷಕ್ಕೆ ಜಿಗಿದು ಅಭಿಮಾನಿಗಳಿಗೆ ಇರುಸು ಮುರುಸು ಕಸಿವಿಸಿ ತರುತ್ತಿದ್ದ ಬಂಗಾರಪ್ಪ ಟೆನ್ನಿಸ್ ಮತ್ತು ಯೋಗ ಪ್ರೇಮಿ. ತಂದೆಯ ಹೆಸರು ಎಷ್ಟಿ ಆಕರ್ಷಕ, ಜನಪ್ರಿಯ  ಎಂದರೆ ಅವರ ಮಗನಿಗೆ ಸ್ವಂತದ ಹೆಸರಿನ ಅವಶ್ಯಕತೆಯೇ ಬರಲಿಲ್ಲ. ಕುಮಾರ್ ಬಂಗಾರಪ್ಪ ಎಂದು ಪ್ರಸಿದ್ಧನಾದ. 

ಸಮಸ್ತ ಕನ್ನಡಿಗರಿಗೂ, ಭಾರತೀಯರಿಗೂ ಬರಲಿರುವ ಹೊಸ ವರುಷ ಉಲ್ಲಾಸ, ಹರ್ಷ, ಯಶಸ್ಸನ್ನು ತರಲಿ ಎಂದು ಹಾರೈಸುತ್ತಾ…….

ನಿಮ್ಮ ಅಬ್ದುಲ್

‘ವಿಕಿಲೀಕ್’ ಅವಾಂತರ

ವಿಕಿಲೀಕ್ ಈಗ ವಿಶ್ವ ಸುದ್ದಿಯಲ್ಲಿ. ವಿಶ್ವದ ಸರಕಾರಗಳ ಮಧ್ಯೆ, ಧುರೀಣರ ಮಧ್ಯೆ ನಡೆದ ಎರಡು ಲಕ್ಷದ ಐವತ್ತು ಸಾವಿರಕ್ಕೂ ಹೆಚ್ಚು ಕೇಬಲ್ ಗಳನ್ನು ತನ್ನ ವೆಬ್ ತಾಣದಲ್ಲಿ ಪ್ರಕಟಿಸಿ ಅಂತಾರಾಷ್ಟ್ರೀಯ ರಾಜಕಾರಣ ಎಂದರೆ ಗರಿ ಗರಿ ಕಪ್ಪು ಸೂಟು, ಮುಗುಳ್ನಗುವಿನೊಂದಿಗೆ ಹಸ್ತಲಾಘವ, ನಂತರ ಮೃಷ್ಟಾನ್ನ ಭೋಜನ ಎಂದು ತಿಳಿದಿದ್ದ ನಮಗೆ ಹೊಸತೊಂದು ವಿಶ್ವದ ಪರಿಚಯ ಮಾಡಿಕೊಟ್ಟಿತು ವಿಕಿಲೀಕ್. ‘ವಿಕಿಪೀಡಿಯ’ ಗೊತ್ತು, ಇದೇನೀ ‘ವಿಕಿಲೀಕ್’ ಎಂದಿರಾ? ವಿಕಿಪೀಡಿಯ ನಮಗೆ ತಿಳಿಯಬೇಕಾದ ವಿಷಯಗಳನ್ನು ಸರಾಗವಾಗಿ, ಕ್ಷಣ ಮಾತ್ರದಲ್ಲಿ ತಿಳಿಸಿಕೊಡುವ ತಾಣವಾದರೆ, ವಿಕಿಲೀಕ್ ಮಾತ್ರ ಸ್ವಲ್ಪ ಸರಿದು ನಿಂತು ನಾವೆಂದಿಗೂ ‘ಕೇಳಬಾರದ, ಆಡಬಾರದ, ನೋಡಬಾರದ’, ವಿಷಯಗಳನ್ನು ನಮಗೆ ತಲುಪಿಸಿ ಮಗುಮ್ಮಾಗಿ ಇದ್ದುಬಿಡುವ whistle blower. ಸ್ವಲ್ಪ ಮಟ್ಟಿಗೆ ನಮ್ಮ ಅಚ್ಚು ಮೆಚ್ಚಿನ ‘ತೆಹೆಲ್ಕಾ’ ರೀತಿಯದು. ಈ ವೆಬ್ ತಾಣದ ಸಾರಥಿ ಆಸ್ಟ್ರೇಲಿಯಾದ 39 ರ ಪ್ರಾಯದ ಜೂಲಿಯಾನ್ ಅಸಾಂಜ್. ಈಗ ಈತ ಕಂಬಿ ಎಣಿಸಲು ಅಥವಾ ತನ್ನ ತಲೆ ಕಳೆದುಕೊಳ್ಳುವ ನಿರೀಕ್ಷೆಯಲ್ಲಿ ಲಂಡನ್ನಿನ ಮೂಲೆಯೊಂದರಲ್ಲಿ ದಿನ ಕಳೆಯುತ್ತಿದ್ದಾನೆ.

ಅಭಿವ್ಯಕ್ತಿ ಸ್ವಾತಂತ್ರ್ಯ. ತಮ್ಮ ತಮ್ಮ ಹಿತಾಸಕ್ತಿಗಳಿಗೆ ಧಕ್ಕೆ ಬಂದಾಗ ತಮ್ಮದೇ ಆದ ಧೋರಣೆ. ಆ ಧೋರಣೆ ಹಿಂಸಾರೂಪ ತಾಳಿದರೂ ಯಾರಿಗೂ ಅದರ ಪರಿವೆ ಇಲ್ಲ. ಸೂಟು ಬೂಟು, ಬಿಳಿಚರ್ಮ ಹೊತ್ತವರು ಏನೇ ಹೇಳಿದರೂ ಎಲ್ಲಾ ಓಕೆ. ಗಡ್ಡ ಮಾತ್ರ ಇರಬಾರದು ಈ ರೀತಿಯ ಮಾತನ್ನಾಡಲು. ಆಗ ಪದಪ್ರಯೋಗದ ಸಮೀಕರಣ ಬದಲಾಗಿ ಬಿಡುತ್ತದೆ. ಕೆನಡಾದ ಪ್ರಧಾನಿಯ ಮಾಜಿ ಸಲಹೆಗಾರ stephen ‘Harper’ ನ ಪ್ರಕಾರ ವಿಕಿ ಲೀಕ ನ ಅಸಾಂಜ್ ನನ್ನು ಕೊಲ್ಲಬೇಕು. ನೋಡಿ ಎಂಥ ಅಸಂಬದ್ಧ, harping ಈತನದು. ಹೆಸರಿಗೆ ತಕ್ಕಂತೆ ನಡತೆ. ಅಭಿವ್ಯಕ್ತಿ ಸ್ವಾತಂತ್ರ್ಯ ತಂದು ಕೊಡುವ ಕಚಗುಳಿ ಎಂಥದ್ದು ಎಂದು ತಡವಾಗಿ ತಿಳಿಯಿತು ಅಮೆರಿಕೆಗೆ ಮತ್ತು ಅದರ ಹಿಂಬಾಲಕರಿಗೆ.

ರಾಜನಿಂದ ಹಿಡಿದು ರಾಜತಾಂತ್ರಿಕನವರೆಗೆ ಯಾರು ಏನು ಹೇಳಿದರು ಎಂದು ಸವಿಸ್ತಾರವಾಗಿ ಪ್ರಕಟಿಸಿದ ವಿಕಿಲೀಕ್ ಅಂತಾರಾಷ್ಟ್ರೀಯ ರಾಜಕಾರಣ ಯಾವ ರೀತಿಯ ‘ಡಬಲ್ ಗೇಂ’ ಎಂದು ನಮಗೆ ಮನವರಿಕೆ ಮಾಡಿಕೊಡುತ್ತಿದೆ. ನಮ್ಮ ದೇಶಕ್ಕೆ ಬಂದು ನಮ್ಮೆಲ್ಲರನ್ನೂ ಮರುಳು ಮಾಡಿ, ನಮಗೆ ಬಾಲಿವುಡ್ ಮೇಲೆ ಇರುವ ವ್ಯಾಮೋಹಕ್ಕೆ ತಕ್ಕಂತೆ ಒಂದಿಷ್ಟು ಡ್ಯಾನ್ಸ್ ಮಾಡಿ ಕೊನೆಗೆ ತಮ್ಮ ಊರು ತಲುಪಿದ ನಂತರ ಬೇರೆಯದೇ ಆದ ಸನ್ನೆ ಕಳಿಸುವುದು. ವಿಶ್ವಸಂಸ್ಥೆಯಲ್ಲಿ ಖಾಯಂ ಸದಸ್ಯತ್ವಕ್ಕಾಗಿರುವ ನಮ್ಮ ಆಸೆಯನ್ನೂ, ಅದಕ್ಕಾಗಿ ನಾವು ಹೆಣಗುತ್ತಿರುವುದನ್ನು ಅರಿತ ಅಮೇರಿಕಾದ ಅಧ್ಯಕ್ಷ ನಮ್ಮಲ್ಲಿಗೆ ಬಂದು ಭಾರತ ಈ ಸ್ಥಾನಕ್ಕೆ ಅತ್ಯಂತ ಅರ್ಹ ರಾಷ್ಟ್ರ, ನಮ್ಮ ಬೆಂಬಲ ಅದಕ್ಕಿದೆ ಎಂದು ನಮ್ಮನ್ನು ಪುಳಕಿತರಾಗಿಸಿ ಹೋದರು. ಈ ಮಾತು ಕೇಳಿ ನಮಗೆ ಆನಂದದ ಮಂಪರು. ಅತ್ತ ಅಮೆರಿಕೆಯ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರ ಅಭಿಪ್ರಾಯ ಬೇರೆಯೇ. ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವಕ್ಕೆ ಭಾರತ “ಸ್ವಯಂ ನೇಮಿತ” ಆಕಾಂಕ್ಷಿ ಎಂದು ಬಿರುದು ನೀಡಿದರು. “self appointed frontrunners” ಅಂತೆ. ಬೇಸರಿಸಬೇಡಿ, ಈ ಸ್ವಯಂ ನೇಮಿತ ಕ್ಲಬ್ಬಿನಲ್ಲಿ ಜಪಾನ್, ಬ್ರೆಜಿಲ್ ಮತ್ತು ಜರ್ಮನಿ ಸಹ ಸೇರಿವೆ. ಆಹ್, ಈಗ ಸ್ವಲ್ಪ ಸಮಾಧಾನ ನೋಡಿ. ನಮ್ಮೊಂದಿಗೆ ಇತರರನ್ನೂ ಸೇರಿಸಿ ಅಪಹಾಸ್ಯ ಮಾಡಿದರೆ ಭಾರ ಸಹಜವಾಗಿಯೇ ಸ್ವಲ್ಪ ಕಡಿಮೆ ಆಗುತ್ತದೆ. ಈ ಭಾವನೆಯೇ ಇರಬೇಕು ನಮ್ಮ ಮಾಧ್ಯಮಗಳು ಇದನ್ನು ಒಂದು ‘slight’ ಎಂದು ಪರಿಗಣಿಸಲು ಸೋತಿದ್ದು. ನೀವು ಅನುಮತಿಸಿದರೆ ನನ್ನದೊಂದು ಸಂಶಯ. ಅಮೇರಿಕಾ ನಮ್ಮನ್ನು ಇನ್ಯಾವ ರೀತಿಯಲ್ಲಿ ನಡೆಸಿ ಕೊಂಡಾಗ ನಾವು ಎಚ್ಚೆತ್ತು ಕೊಂಡು ‘ thanks for everything, yank. bye bye’ ಎಂದು ವಿನಯದಿಂದ ಹೇಳೋದು? ಅಮೆರಿಕೆಯ ಸಹವಾಸ ಮಾಡಿದವರು ಉದ್ಧಾರವಾದ ಕುರಿತು ಕೈಲಾಸದಲ್ಲಿ ಮನೆ ಮಾಡಿರುವವನಿಗೆ ಬಹುಶಃ ಗೊತ್ತಿರಬಹುದು. ಬೇರಾರಿಗೂ ಗೊತ್ತಿರುವ ಬಗ್ಗೆ ವರದಿಯಿಲ್ಲ. ಸದ್ದಾಮ್ ಕಾಲಾವಧಿ ನಂತರದ ಇರಾಕಿನ ತೈಲ ಸಚಿವನಾಗಿದ್ದ ‘ಅಹಮದ್ ಶಲಾಬಿ’ ಹೇಳಿದ್ದು america betrays its friends. it sets them up and betrays them. I’d rather be america’s enemy. ನಿನ್ನ ಮೈತ್ರಿಗಿಂತ ನಿನ್ನ ಶತ್ರುತ್ವವೇ ಬಲು ಚೆಂದ ಎಂದು. ವಿಷಕನ್ಯೆಗೆ ಹೇಳಬಹುದಾದ ಸವಿ ಮಾತುಗಳು ಇವು, ಅಲ್ಲವೇ? ಅಮೆರಿಕೆಯ ಸಹಾಯದಿಂದ ಅಧಿಕಾರದ ಗದ್ದುಗೆಗೆ ಏರಿದ ವ್ಯಕ್ತಿಯೊಬ್ಬ ಈ ಮಾತನ್ನು ಹೇಳಬೇಕೆಂದರೆ ಅವನಿಗೆ ಎಂಥ ರಾಜೋಪಚಾರ ಸಿಕ್ಕಿರಬೇಕು?

ಈಗ ಈ ಬರಹದಲ್ಲಿ anti americanism ಧೋರಣೆಯನ್ನು ದಯಮಾಡಿ ಕಾಣಬೇಡಿ. ಅಮೆರಿಕೆಯವೇ ಆದ “Levis” ಜೀನ್ಸ್, ‘papa johns’ pizza, ಮತ್ತು ಕಡಿಮೆ ಸ್ಪೆಲ್ಲಿಂಗ್ ಇರುವ ‘ಅಮೇರಿಕನ್ ಇಂಗ್ಲಿಶ್’ ನನಗೆ ತುಂಬಾ ಇಷ್ಟ. ನನ್ನ ನಿಲುವು ಇಷ್ಟೇ. ನಮ್ಮ ರಾಜಕಾರಣ ಮತ್ತು ಅವರ ರಾಜಕಾರಣ ಸ್ವಲ್ಪ ‘ಡಿಫ್ಫ್ರೆಂಟು’. ಆದರೆ ನಮಗೆ ಈ ‘ಡಿಫ್ಫ್ರೆನ್ಸು’ ಅರಗಿಸಿಕೊಳ್ಳಲಾಗದಂಥ ‘depression’ ತಂದೊಡ್ಡುತ್ತದೆ. ಹಾಗಾಗಿ ಸಂಚಾರಿ ನಿಯಮದ ಥರ ‘ನಡುವೆ ಅಂತರವಿರಲಿ’ ರೀತಿಯ ಅಂತರ ಕಾಯ್ದು ಕೊಳ್ಳಲು ನನ್ನ ಹಂಬಲ. ಗುಮಾನಿ ಪಡಬೇಕಾದ ulterior motive ಇಲ್ಲ.

ಬನ್ನಿ ನಾನಿರುವ ಕೊಲ್ಲಿ ಪ್ರದೇಶಕ್ಕೆ. ಇಲ್ಲೊಂದು ಸ್ವಾರಸ್ಯ. ನೋಡಿ, ನಾನು ಕೊಲ್ಲಿ ಎಂದು ಟೈಪ್ ಮಾಡಿದಾಗ “ಕೊಳ್ಳಿ” ಅಂತ ತೋರಿಸಿತು ಗೂಗಲ್. ಒಂದು ರೀತಿಯ “ಕೊಳ್ಳಿ” ಎಂದೇ ಕರೆಯಬಹುದು ಈ ಪ್ರಾಂತ್ಯವನ್ನು. ಸೌದಿ ಅರೇಬಿಯಾದ ದೊರೆ ‘ಅಬ್ದುಲ್ಲಾ ಇಬ್ನ್ ಅಬ್ದುಲ್ ಅಜೀಜ್ ಅಲ್-ಸೌದ್’ ವಿಶ್ವದ ಮುಸ್ಲಿಮರು ಗೌರವಿಸುವ ವ್ಯಕ್ತಿತ್ವ. ಏಕೆಂದರೆ ಇಸ್ಲಾಮಿನ ಪವಿತ್ರ ನಗರಗಳಾದ ಮಕ್ಕಾ ಮತ್ತು ಮದೀನ ಇರುವುದು ಸೌದಿ ಅರೇಬಿಯಾದಲ್ಲಿ. ಇಲ್ಲಿನ ದೊರೆ ಹೆಮ್ಮೆಯಿಂದ ತನ್ನನ್ನು ತಾನು ಕರೆದುಕೊಳ್ಳುವುದು ಎರಡು ಪವಿತ್ರ ಕ್ಷೇತ್ರಗಳ ಸಂರಕ್ಷಕ ಎಂದು. ಸಾವಿರಾರು ಕೋಟಿ ಖರ್ಚು ಮಾಡಿ ಎರಡು ಪವಿತ್ರ ಕ್ಷೆತ್ರಗಳನ್ನು ಇನ್ನಷ್ಟು ವಿಸ್ತರಿಸಿದ ಖ್ಯಾತಿ ಈ ದೊರೆಗೆ. ಹಾಗಾಗಿ ವಿಶ್ವದ ಮುಸ್ಲಿಮರಿಗೆ ಇವರ ಮೇಲೆ ಆದರ, ಗೌರವ. ಹಾವಿನ ತಲೆ ಕಡಿಯುವಂತೆ ಕಡಿಯಬೇಕು ಎಂದು ಇರಾನಿನ ಕುರಿತು ಅಮೆರಿಕೆಗೆ ಶಿಫಾರಸು ಮಾಡಿದರು ದೊರೆ ಅಬ್ದುಲ್ಲಾ ಎಂದು ವಿಕಿಲೀಕ್ ಎಲ್ಲರನ್ನೂ ತಲ್ಲಣಗೊಳಿಸಿತು. ಒಬ್ಬ ಮುಸ್ಲಿಮ್ ರಾಷ್ಟ್ರದ ದೊರೆ ಮತ್ತೊಂದು ಸೋದರ ದೇಶದ ವಿರುದ್ಧ ಈ ರೀತಿ ಮಾತನಾಡಿದ್ದು ಅಚ್ಚರಿ ತರಿಸಿತು ಪಾಶ್ಚಾತ್ಯ ದೇಶಗಳಿಗೆ. ಇವರಿಬ್ಬರ ನಡುವಿನ ಸ್ನೇಹದ “ಆಳ” ಎಲ್ಲರಿಗೂ ಗೊತ್ತಿದ್ದರೂ ತಲೆ ಕಡಿಯಲು ಶಿಫಾರಸ್ಸು ಮಾಡುವ ಮಟ್ಟಕ್ಕೆ ಹೋಗುತ್ತದೆ ಎಂದು ಯಾರೂ ಎಣಿಸಿರಲಿಲ್ಲ. ಇರಾನ್ ಶಿಯಾ ಬಾಹುಳ್ಯದ ರಾಷ್ಟ್ರ ಮತ್ತು ಸೌದಿ, ಸುನ್ನಿ ರಾಷ್ಟ್ರ. ಚಾರಿತ್ರಿಕವಾಗಿ ಶಿಯಾ – ಸುನ್ನಿ ಪಂಗಡಗಳ ನಡುವಿನ ಜಟಾಪಟಿ ತುಂಬಾ ಹಳತು. ideological difference ಅಲ್ಲದಿದ್ದರೂ ವ್ಯಕ್ತಿ (ಪ್ರವಾದಿ ಮುಹಮ್ಮದ್ ಮತ್ತು ‘ಹಜರತ್ ಅಲಿ’ ವಿಷಯದಲ್ಲಿ) ನಿಷ್ಠೆಯಲ್ಲಿ ಸುನ್ನಿ ಮತ್ತು ಶಿಯಾ ಜನರಲ್ಲಿ ಒಡಕಿದೆ. ಸೌದಿ ದೊರೆಯ ಈ ಬೆಚ್ಚಿ ಬೀಳಿಸುವಂಥ ಮಾತನ್ನು ಕೇಳಿದ ಇರಾನ್ ಸೌದಿಯನ್ನು ಇನ್ನು ಯಾವ ರೀತಿ ನಡೆಸಿಕೊಳ್ಳಬಹುದು ಎಂದು ಕಾದು ನೋಡಬೇಕು.

ಈ ತೆರನಾದ ಸುದ್ದಿಗಳನ್ನು ಚಿಕ್ಕಾಸಿನ ಅಪೇಕ್ಷೆಯೂ ಇಲ್ಲದೆ ಬಟಾಬಯಲು ಮಾಡುತ್ತಿರುವ ವಿಕಿಲೀಕ್ ಮೇಲೆ ಅಮೇರಿಕ ಮುಂತಾದ ರಾಷ್ಟ್ರಗಳ ಕೆಂಗಣ್ಣು. ಇದ್ದದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದೆಯೋದು ಲೋಕ ರೂಢಿಯೇ ತಾನೇ? ಅಮೇರಿಕಾ ಏಕೆ ಅದಕ್ಕೆ ಹೊರತಾಗಬೇಕು? ವಿಕಿಲೀಕ್ ವೆಬ್ ತಾಣ ಬೇರಾವುದಾದರೂ ಒಂದು ದೇಶ ಅಮೆರಿಕೆಯ ವಿರುದ್ಧ ಹೇಳಿದ್ದನ್ನು ಲೀಕ್ ಮಾಡಿದ್ದಿದ್ದರೆ ಅಮೇರಿಕ ಕುಣಿದು ಕುಪ್ಪಳಿಸುತ್ತಿತ್ತು. ಆದರೆ ‘ವಿಕಿಲೀಕ್’ ನ ಕೊಡಲಿ ತನ್ನ ಬುಡದ ಕಡೆಗೆ ಪ್ರಯಾಣ ಬೆಳೆಸಿದಾಗ ಮಾತ್ರ ಅಮೇರಿಕಾ ಹೌಹಾರಿತು. ಹೌಹಾರದೆ ಏನು? ಬೇಲಿಯೂ ತಾನೇ, ಮೇಯುವವನೂ ತಾನೇ. ಇದು ಅಮೆರಿಕೆಯ ವಿದೇಶಾಂಗ ನೀತಿ. ಹಾಗಾಗಿ ವಿಕಿಲೀಕ್ ಸ್ಥಾಪಕ ‘ಅಸಾಂಜ್’ ನನ್ನು ದೇಶದ್ರೋಹಿ ಎಂದು ಹಣೆ ಪಟ್ಟಿ ಲಗತ್ತಿಸಿದ್ದಲ್ಲದೆ ಅವನನ್ನು ವಧಿಸುವ ತನಕ ಅಮೆರಿಕೆಯ ಆಕ್ರೋಶ ಆವರಿಸಿತು. ಆದರೆ ಇದಕ್ಕೆಲ್ಲಾ ಕ್ಯಾರೇ ಅನ್ನದೆ ಅಸಾಂಜ್ ತನ್ನ ಕೆಲಸ ಇನ್ನೂ ಮುಂದುವರಿಸುವುದಾಗಿ ಅವನ ಬೆಂಬಲಿಗರಿಗೆ ಭರವಸೆ ನೀಡಿದ. ಈಗ ಆತನ ಕಣ್ಣು ಅಮೆರಿಕೆಯ ಅತಿ ದೊಡ್ಡ ಬ್ಯಾಂಕುಗಳ ಅವ್ಯವಹಾರ ಮತ್ತು ಕಾರ್ಯವೈಖರಿಯ ಕಡೆ. ಅಸಾಂಜ್ ನ ಮಾತು ಸಿಡಿಲಿನಂತೆ ಎರಗಿತು ಬ್ಯಾಂಕಿಂಗ್ ವಲಯಗಳ ಮೇಲೆ. ಇವನ್ನೆಲ್ಲಾ ಕೇಳುತ್ತಿರುವ, ನೋಡುತ್ತಿರುವ ನಮಗೆ ಅಮೇರಿಕಾ ಪ್ರಪಂಚದ ಎಲ್ಲಾ ಪಾಪಗಳ, ಕೃತ್ರಿಮಗಳ ಉಗಮಸ್ಥಾನವೋ ಎಂದು ತೋರುವುದು ಅಸಹಜವೇನಲ್ಲ. ಹಾಲಿವುಡ್ ಅಂದ್ರೆ ಒಂದಿಷ್ಟು ಸೆಕ್ಸ್ ಇರಲೇಬೇಕು, ಏನಂತೀರಾ? ಹಾಗೆಯೇ ಅಂತಾರಾಷ್ಟ್ರೀಯ ರಾಜಕಾರಣದಲ್ಲೂ ಒಂದಿಷ್ಟು ಶೃಂಗಾರ ನುಸುಳುವುದಿದೆ ಎಂದು ವಿಕಿಲೀಕ್ ಬಯಲು ಮಾಡಿತು. ಲಿಬ್ಯಾ ದೇಶದ charismatic ಅಧ್ಯಕ್ಷ ‘ಮುಅಮ್ಮರ್ ಗದ್ದಾಫಿ’ ಜೊತೆ ಯಾವಾಗಲೂ ಮೋಹಕ ಅಂಗಸೌಷ್ಟವ ಹೊಂದಿದ ಯುಕ್ರೇನ್ ದೇಶದ ನರ್ಸ್ ಇರುತ್ತಾಳೆ ಎಂದು ಒಬ್ಬ ರಾಜತಾಂತ್ರಿಕ ಅಸೂಯೆಯಿಂದ ಜೊಳ್ಳು ಸುರಿಸಿದ. ಅಂದ್ರೆ ಬರೀ ಬೋರ್ ಹೊಡೆಸುವ global warming ರಾಜಕಾರಣ ಮಾತ್ರ ಅಲ್ಲ ಮಹೋದಯರ ಆಸಕ್ತಿ ಎಂದು ಇದರಿಂದ ಸ್ಪಷ್ಟವಾಯಿತು. ಕಂಪ್ಯೂಟರ್ ಬದಿಗೆ ಸರಿಸಿ ಹೀಗೇ ಮೋಜಿಗಾಗಿ ಸ್ವಲ್ಪ ಊಹಿಸಿ. ವಿಕಿಲೀಕ್ ತೆರನಾದ ಒಂದು ವ್ಯವಸ್ಥೆ ನಮ್ಮ ದೇಶದಲ್ಲಿಯೂ ಇದ್ದಿದ್ದರೆ 2G, 3G ಕಾಂಡಗಳು, ಆದರ್ಶ್ ಸೊಸೈಟಿ, ಸೈನಿಕರ ಶವ ಪೆಟ್ಟಿಗೆ ಗಳಂಥ ಹಗರಣ ಗಳು, ನಾವು ಕಂಡ ಬಗೆ ಬಗೆಯ ವರ್ಣರಂಜಿತ ಧಂಧೆಗಳು, ಇವೆಲ್ಲಾ ಪಿಕ್ನಿಕ್ ಥರ ಕಾಣುತ್ತಿದ್ದವು. ಈ ಮೇಲೆ ಹೇಳಿದ ಹಗರಣಗಳನ್ನೂ ಮೀರಿಸುವ ದೈತ್ಯಾಕಾರದ ತಿಮಿಂಗಿಲಗಳು ವಿಕಿಲೀಕ್ ಬಲೆಗೆ ಸಿಕ್ಕು ವಿಲವಿಲ ಎನ್ನುತ್ತಿದ್ದವೋ ಏನೋ.

ಜೂಲಿಯನ್ ಅಸಾಂಜ್ ನ ವಿಕಿಲೀಕ್ ಜ್ವಾಲಾಮುಖಿಯಂತೆ ಸ್ಫೋಟಿಸಿದೆ. ಅದರ ಸುಡುವ ಲಾವಾರಸ ಜಗತ್ತಿನ ನಾಲ್ಕೂ ಕಡೆ ಹರಿಯುತ್ತಿದೆ. ಹರಿಯುವ ನಾಲಗೆಗಳಿಗೆ ಇನ್ನಷ್ಟು ಫಲವತ್ತನ್ನು ಒದಗಿಸುತ್ತಿದೆ. ಇದಕ್ಕೆಲ್ಲಾ ಕಾರಣೀಭೂತನಾದ ಜೂಲಿಯಾನ್ ಅಸಾಂಜ್ ನನ್ನು ಹೇಗೆ ಗತಿ ಕಾಣಿಸಬೇಕೆಂದು ಬಲಿಷ್ಠ ರಾಷ್ಟ್ರಗಳು ಲೆಕ್ಕ ಹಾಕುತ್ತಿವೆ. ಅಮೇರಿಕಾ ವಿರೋಧಿಯಾದ ಅಸಾಂಜ್ ಒಬ್ಬ ಸಾಮಾನ್ಯ ಆಸ್ಟ್ರೇಲಿಯನ್ ಪ್ರಜೆ. ಆತನದು ಠಿಕಾಣಿ ಯಿಲ್ಲದ ವಾಸ. ಒಂದೇ ಸ್ಥಳದಲ್ಲಿ ಎರಡು ರಾತ್ರಿಗಳನ್ನು ಕಳೆಯದ ಅಲೆಮಾರಿ. ವಿಶ್ವದ ಮೇಲಿನ ಅಮೆರಿಕೆಯ ಕಪಿ ಮುಷ್ಠಿ ಅವನಿಗೆ ಇಷ್ಟವಿಲ್ಲ. ಪ್ರಪಂಚದಲ್ಲಿ ನಡೆಯುವ ಅನ್ಯಾಯಗಳು ಜನರಿಗೆ ತಲುಪಿದರೆ ಪರಿಸ್ಥಿತಿ ಸುಧಾರಿಸಬಹುದು ಎಂದು ನಂಬಿರುವ ಈತ, ಮಾಡುತ್ತಿರುವುದು ಒಳ್ಳೆಯ ಕೆಲಸವೋ ಅಥವಾ ಕೆಲಸವಿಲ್ಲದ ಬಡಗಿಯ ಬೇಡದ ಉಸಾಬರಿಯೋ ಎಂದು ವಿಶ್ವವೇ ಹೇಳಬೇಕು. ಆದರೆ ಆತನ ತಾಯಿ ಮಾತ್ರ ಹೇಳುತ್ತಿರುವುದು “ನನಗೆ ನನ್ನ ಮಗನ ಪರಿಸ್ಥಿತಿಯ ಬಗ್ಗೆ ಆತಂಕವಾಗುತ್ತಿದೆ, ನಾನು ಅವನನ್ನು ಪ್ರೀತಿಸುತ್ತೇನೆ, ಅವನು ಎಷ್ಟಿದ್ದರೂ ನನ್ನ ಮಗನೇ. ನನ್ನ ಮತ್ತು ನನ್ನ ಮಗನ ಬಗ್ಗೆ ಅವರು ಹೇಳುತ್ತಿರುವುದೆಲ್ಲಾ ನಿಜವಲ್ಲ’ ಎಂದು ಆಕೆ ತನ್ನ ಮಗನ ಸುರಕ್ಷೆಗಾಗಿ ಹಂಬಲಿಸುತ್ತಾಳೆ, ಎಲ್ಲಾ ಹೆತ್ತಬ್ಬೆಯರು ಚಡಪಡಿಸುವ ರೀತಿಯಲ್ಲಿ.

ಗೊತ್ತಿಲ್ಲದವರಿಗೆ: ‘ವಿಕಿ’ ಎಂದರೆ, ‘ಹವಾಯಿ’ ಭಾಷೆಯಲ್ಲಿ ವೇಗ, ಕ್ಷಿಪ್ರ ‘fast’ ಅಂತ. ಮತ್ತು ಲೀಕ್ ಎಂದರೆ ಅದೇ ಆರ್ಡಿನರಿ ಲೀಕು, ನಮ್ಮಗಳ ಅಡುಗೆ ಮನೆಯಲ್ಲಿನ ‘ನಲ್ಲಿ’ ತೊಟ ತೊಟ ಎಂದು ಹನಿಯುದುರಿಸುತ್ತಾ ನಮ್ಮ ತಾಳ್ಮೆಯನ್ನು ಪರೀಕ್ಷಿಸುವ ಸೋರಿಕೆ. ಈ ಕ್ಷಿಪ್ರ ಮತ್ತು ಸೋರಿಕೆ ಇವೆರಡೂ ಸೇರಿಕೊಂಡಾಗ ಆಗುವುದು ants in the pant ಪರಿಸ್ಥಿತಿ. ಮೇಲೆ ವಿವರಿಸಿದ ಪರಿಸ್ಥಿತಿ.

pic courtesy: independent, UK