ಇಂದು ಬೆಳಿಗ್ಗೆ ಮಲಯಾಳಿ ಒಬ್ಬಾತ ನಡೆಸುವ ಬುಫಿಯಾ ಎಂದು ಕರೆಯಲ್ಪಡುವ ಚಾದಂಗಡಿಯ ಟೀವಿಯಲ್ಲಿ ಕೇರಳದ ನೂತನ ಮಖ್ಯ ಮಂತ್ರಿಗಳ ಸಂದರ್ಶನವನ್ನು ಕೈರಳಿ ಚಾನಲ್ ನ ಬಾತ್ಮೀದಾರ ನಡೆಸುತ್ತಿದ್ದನ್ನು ವೀಕ್ಷಿಸಿದೆ. ಎರಡನೇ ಬಾರಿಗೆ ಮು. ಮಂತ್ರಿಯಾದ ಊಮ್ಮನ್ ಚಾಂಡಿ ಅನುಭವೀ ರಾಜಕಾರಣಿ.
ಬಾತ್ಮೀದಾರ ಕೇಳಿದ ಪ್ರಶ್ನೆಗಳಿಗೆ ವಿಚಲಿತನಾಗದೆ ನೇರವಾಗಿ ಉತ್ತರ ನೀಡುತ್ತಿದ್ದ ಮು. ಮಂತ್ರಿಗಳು ಕೆಲವೊಂದು ಕ್ಲಿಷ್ಟಕರ ಪ್ರಶ್ನೆಗಳನ್ನು ಎದುರಿಸಿದರು. ಕೇವಲ ಎರಡು ಶಾಸಕರ ಹೆಚ್ಚಳದ ಬಹುಮತ ಹೊಂದಿರುವ ಕಾಂಗ್ರೆಸ್ ಸಮ್ಮಿಶ್ರ ಸರಕಾರ ಎಡರು ತೊಡರು ಗಳನ್ನು ಕಾಣದು ಎನ್ನುವುದು ಇವರ ವಿಶ್ವಾಸ. ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಯಾರಿಗೂ ಭಯ ಪಡುವ ಅವಶ್ಯಕತೆ ಎನಗಿಲ್ಲ ಎಂದಾಗ ಮು. ಮಂತ್ರಿಗಳನ್ನು ಬಾತ್ಮೀದಾರ ಕೇಳಿದ, ಭಯವಿಲ್ಲ ಎಂದಿರಲ್ಲ ಯಾರ ಭಯವೂ ಇಲ್ಲವೇ? ಆಗ ಮು. ಮಂತ್ರಿಗಳು ಹೇಳಿದ್ದು “ನನಗೆ ದೇವರ ಮೇಲೆ ಭಯ ಮತ್ತು ಜನರ ಭಯ ಇದೆ, ಅಷ್ಟೇ”.
ಮಂತ್ರಿಗಳಿಗೆ ಇರಬೇಕಾದ ಅರ್ಹತೆಗಳ ಕುರಿತು ಕೇಳಲಾಗಿ integrity, common sense ಇದ್ದರೆ ಕೆಲಸ ಸುಗಮ ಎಂದರು. ಒಳ್ಳೆಯ ಮಾತುಗಳೇ. ಆದರೆ ಅವರು ಹೇಳಿದ ಈ ಎರಡು ಗುಣದ್ವಯಗಳು ರಾಜಕಾರಣಿ ಅಥವಾ ಮಂತ್ರಿ ಮಹೊದಯರುಗಳಲ್ಲಿ ಇದ್ದಿದ್ದರೆ ನಮ್ಮ ದೇಶ ಹೀಗೆ ಇರುತ್ತಿತ್ತೇ?
ಕೊನೆಗೆ ಮುಖ್ಯಮಂತ್ರಿಗಳು ಸಂದರ್ಶನದ ಅವಧಿಯಲ್ಲಿ ದೇವರ ಪ್ರಸ್ತಾವನೆ ಮಾಡಿದ್ದನ್ನು ಮತ್ತೊಮ್ಮೆ ಕೆದಕುತ್ತಾ ಆತ ಕೇಳಿದ ಇಂದು ಬೆಳಿಗ್ಗೆ ದೇವರಲ್ಲಿ ಏನನ್ನು ಬೇಡಿ ಕೊಂಡಿರಿ ಎಂದು. ಅದಕ್ಕೆ ಊಮ್ಮನ್ ಚಾಂಡಿ ನೀಡಿದ ಉತ್ತರ “ಯಾವುದೇ ನಿರ್ದಿಷ್ಟ ಬೇಡಿಕೆ ಇಟ್ಟುಕೊಂಡು ನಾನು ದೇವರಲ್ಲಿ ಕೇಳೋಲ್ಲ, ನಾನು ಮಾಡುವ ಕೆಲಸಗಳು ಸರಿಯಾದ ಮಾರ್ಗದಲ್ಲಿ ಇರಲು ಸಹಕರಿಸು ಎಂದು ಮಾತ್ರ ಕೇಳಿ ಕೊಳ್ಳುತ್ತೇನೆ”.
ಅತ್ಯಂತ ಸರಳವಾಗಿ ಬದುಕುವ, ತಲೆ ಸಹ ಬಾಚದ, ಇಸ್ತ್ರಿ ಹಾಕಿದ ಬಟ್ಟೆ ಧರಿಸದ, ದೇವರನ್ನು ಭಯಪಡುವ ದೈವ ಭಕ್ತ, ಜನರಿಗೆ ಹೆದರುವ ಪ್ರಜಾಪತಿ ಕೇರಳ ರಾಜ್ಯವನ್ನ ಅಭಿವೃದ್ಧಿ ಪಥದತ್ತ ಮುನ್ನಡೆಸಲಿ ಎಂದು ಹಾರೈಸೋಣ.