ಪಾಕಿಸ್ತಾನದಲ್ಲಿ ಆಂಜನೇಯ

ರಾಮಾಯಣದಲ್ಲಿ ನಮ್ಮೆಲ್ಲರ ಕಲ್ಪನೆಯನ್ನು ಹಿಡಿದಿಡುವ ಮಹತ್ತರ ಪಾತ್ರ ಎಂದರೆ ಹನುಮಂತನದು. ಸ್ವಾಮಿ ನಿಷ್ಠೆ ಮತ್ತು ಶೌರ್ಯಗಳ ಸಂಕೇತವಾದ ಹನುಮಾನ್ ಹಲವು ಹೆಸರುಗಳಿಂದ ನಮಗೆ ಪರಿಚಿತ. ಚಿಕ್ಕವನಿದ್ದಾಗ ನಮ್ಮ ನೆರೆಯವರೊಂದಿಗೆ ಭದ್ರಾವತಿ ಸಮೀಪದ ಸುಣ್ಣದ ಹಳ್ಳಿಯ ಆಂಜನೇಯನ ದೇವಸ್ಥಾನಕ್ಕೆ ಒಂದೆರಡು ಬಾರಿ ಭೇಟಿ ಕೊಟ್ಟು ದೇವಸ್ಥಾನದಲ್ಲಿ ನೇತು  ಹಾಕಿದ್ದ ಘಂಟೆ ಬಾರಿಸಿ ಪ್ರಸಾದ ಸವಿದಿದ್ದೆ. ಭಾರತದಲ್ಲಿ ಆಂಜನೇಯನ ದೇವಸ್ಥಾನಗಳಿಗೆ ಬರವಿಲ್ಲ. ಆದರೆ ಪಾಕಿಸ್ತಾನದಲ್ಲೂ ಆಂಜನೇಯನ ಇರುವಿಕೆ ಇಂದು ನನ್ನ ಕಣ್ಣಿಗೆ ಬಿತ್ತು. ಲಾಹೋರ್ ನಗರದ ಸಂಗ್ರಹಾಲಯದಲ್ಲಿ ವಿರಾಜಮಾನ ಹನುಮಂತನ ಚಿತ್ರ ಮೇಲಿನದು. 

ಚಿತ್ರ ಕೃಪೆ: ಪಾಕಿಸ್ತಾನಿ ವನಿತೆ ಮಾಹಮ್ ತಾರಿಕ್ ರವರ flikr ಖಾತೆಯಿಂದ

೯೯೯೯

ಒಂಭತ್ತು ಸಾವಿರದ ಒಂಭೈನೂರ ತೊಂಭತ್ತೊಂಭತ್ತು, (೯೯೯ ); ಈ ಫಿಗರ್ ನೋಡಿ “ಬಾಟಾ” ದವರ ಎಕ್ಕಡ ಅಥವಾ ಬೂಟ್ ಗಳು ನೆನಪಿಗೆ ಬಂತೇ? ಹೌದು ಅವರೇ ತಾನೇ ಈ ರೀತಿಯ ಫುಲ್ ನಂಬರ್ ಗಳ ದಡದ ತುದಿಗೆ ಬಂದು ನಿಲ್ಲೋದು? ಸಾವಿರ ಎಂದು ಬಿಟ್ಟರೆ ಜನ ಹೌಹಾರುವರು ಎಂದು ೯೯.೯೯ ಅಂತ ಬೆಲೆ ಇಟ್ಟು ನೂರು ರೂಪಾಯಿ ಪೂರ್ತಿಯಾಗಿ ಪೀಕಿಸಿ ಕೊಂಡು ಒಂದು ಪೈಸೆಯ ಚೇಂಜ್ ಸಹ ಕೊಡದೆ ನೂರು ರೂಪಾಯಿ ಕೊಟ್ಟೆ ಈ ಚಪ್ಪಲಿಗೆ ಎಂದು ಹೇಳಲೂ ಭಯ ಆಗುವಂತೆ ಮಾಡಿದ್ದು ? ನೂರು ರೂಪಾಯಿಗೆ ಒಂದು ಪೈಸೆ ಕಡಿಮೆ ಕೊಟ್ಟು ನೂರು ಕೊಟ್ಟೆ ಎಂದು ಹೇಳೋದು ನಾಗರೀಕರ ಲಕ್ಷಣ ಅಲ್ಲ, ಅಲ್ಲವೇ? ಹಾಳು ಪುರಾಣ ಬಿಡಿ, ಈ ೯೯೯೯ ಬಾಟಾ ದ ಎಕ್ಕಡ ಬೆಲೆಯೂ ಅಲ್ಲ, ಯಾವುದೋ ಎಮೆರ್ಜೆನ್ಸಿ ನಂಬರ್ ಸಹ ಅಲ್ಲ. ಇದು ನನ್ನ ಪ್ರೀತಿಯ ಊರಿನ, ಪ್ರೀತಿಯ ಹಳೇ ಸೇತುವೆ ಮೇಲೆ ದೌಡಾಯಿಸಿದ ಜನರ ಸಂಖ್ಯೆ. ಅಂದರೆ ಹಳೇ ಸೇತುವೆ ಬ್ಲಾಗ್ ಅನ್ನು ಇದುವರೆಗೆ ೯೯೯೯ ಜನ ನೋಡಿದ್ದಾರೆ. ಒಂದು ರೀತಿಯ ಶುಭ ಸಂಖ್ಯೆ, ಈ ಶುಭ ಕಾಮನ ಹುಣ್ಣಿಮೆಯಂದು. ಸೂಪರ್ ಮೂನ್ ಹೇಳಿ ಕೊಳ್ಳುವಂಥ ಸೂಪರ್ ಆಗಿ ಕಂಗೊಳಿಸದಿದ್ದರೂ ಈ ಸಂಖ್ಯೆ ಮಾತ್ರ ನನ್ನಲ್ಲಿ ಒಂದು ತೆರನಾದ ಸಂಚಲನ ತಂದಿದ್ದಂತೂ ನಿಜವೇ.  

ನನ್ನ ಬರಹ ನೋಡಿದ ಜನರಿಗೆ ನಾನು ಬರಹಗಾರ ಅಲ್ಲ ಎಂದು ಅನ್ನಿಸಿದರೆ ನನ್ನ ಮೇಲೆ ಸೂಪರ್ ಮೂನ್ ಆಗಲಿ, ವಿಶಾಲವಾದ ಆಗಸವಾಗಲಿ ಕಳಚಿ ಬೀಳೋಲ್ಲ. ನನ್ನಲ್ಲಿ ಕೀಳರಿಮೆ ಸಹ ಮನೆ ಮಾಡೋಲ್ಲ. ಯಾರೋ ಒಬ್ಬರು ಹೇಳಿದಂತೆ ನಾನು ಗಟ್ಟಿ ಮನುಷ್ಯ. ಎಷ್ಟಿದ್ದರೂ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇರುವ ನಗರಿಯವನಲ್ಲವೇ ನಾನು? 

ಪುಕ್ಕಟೆ ಸಿಗುವ ಆಸೆಗೆ ಬಲಿ ಬಿದ್ದು ಶುರು ಮಾಡಿದ್ದು ಈ ಧಂಧೆ. ಬರೆಯುವ ಧಂಧೆ.  ಅದೇನು ಪುಕ್ಕಟೆ ಅಂತ ಜೊಳ್ಳು ಸುರಿಸಿದಿರಾ? ನಾಚಿ ಕೊಳ್ಳಬೇಡಿ, ಮನುಷ್ಯನ ಜಾಯಮಾನವೇ ಅದು. ಪುಕ್ಕಟೆ ಸಿಕ್ಕಿದ್ದು ಬ್ಲಾಗ್ ಆರಂಭಿಸುವ ಸೌಲಭ್ಯ.  ಕರ್ನಾಟಕ ರಾಜ್ಯದ ೧೦ ಲಕ್ಷದ, ೧೦ ಲಕ್ಷ ಪೂರ್ತಿ ಕೈಗೆ ಬರದ  ಲಾಟರಿಯಂತೂ ಅಲ್ಲ. ವರ್ಡ್ಪ್ರೆಸ್, ಬ್ಲಾಗ್ಸ್ಪಾಟ್, “tumblr” ಮುಂತಾದವರು ಜನರಿಗೆ ತಮ್ಮ ಬರವಣಿಗೆಯ ತೀಟೆ ತೀರಿಸಿಕೊಳ್ಳುವುದಕ್ಕಾಗಿ ಬ್ಲಾಗ್ ಸೈಟ್ ಆರಂಭಿಸಿಕೊಳ್ಳುವ ಸವಲತ್ತು ನೀಡಿದಾಗ ಮುಗಿಬಿದ್ದು ಕೈ ಚಾಚಿದವರಲ್ಲಿ ನಾನೂ ಒಬ್ಬ.  ಬ್ಲಾಗಿಗೊಂದು ಹೆಸರು ಕೊಡಬೇಕು. ಚಿತ್ರ ವಿಚಿತ್ರ ಹೆಸರುಗಳು ಮನಃ ಪಟಲದ ಮೇಲೆ ಹಾದು ಹೋದರೂ ಸೊರಗಿದ ಭದ್ರಾ ನದಿಯ ಸಂಗಾತಿ ಹಳೇ ಸೇತುವೆ ಹೆಸರನ್ನು ಇಟ್ಟೆ. ಶಾಲೆಗೆ ಚಕ್ಕರ್ ಹೊಡೆದು ಇದೇ ಹಳೇ ಸೇತುವೆ ದಾಟಿ ಕನಕ ಮಂಟಪಕ್ಕೆ ಬಂದು ಪುಢಾರಿಗಳ ಭಾಷಣ ಕೇಳುತ್ತಿದ್ದೆ. ಎಲ್ರೂ ಚಕ್ಕರ್ ಹೊಡೆದು ಸಿನೆಮಾಕ್ಕೂ, ಕ್ರಿಕೆಟ್ ಆಡೋಕ್ಕೂ ಹೋದ್ರೆ ಈ ಅಬ್ಬೇಪಾರಿ ಏನು ಪುಡ್ಹಾರಿ, ಗಿಡ್ಹಾರಿ ಅಂತಿದ್ದಾನೆ ಎಂದು ಮೂಗಿನ ಮೇಲೆ ಬೆರಳಿಡ ಬೇಡಿ. ರಾಜಕಾರಣ ಎಂದರೆ ೧೯೭೭ ರಿಂದ ನನಗೆ ತುಂಬಾ ಇಷ್ಟ. ನನ್ನ ಪಕ್ಷ ಜನತಾ ಪಕ್ಷ. ಮೊರಾರ್ಜಿ ಭಕ್ತ. ಚರಣ್ ಸಿಂಗ್ ಮೊರಾರ್ಜಿಗೆ ಕೈ ಕೊಟ್ಟಾಗ ತಲೆ ಮೇಲೆ ಕೈಹೊತ್ತು ಕೂತ ಮಿಡ್ಲ್ ಸ್ಕೂಲ್ ಬಾಲಕ ನಾನು. ಮಾರ್ವಾಡಿ ಸ್ನೇಹಿತನೊಬ್ಬ ಇಂದಿರಾ ನಮ್ ತಾಯಿ ಎಂದಾಗ, ನಾನೇಕೆ ಇವನನ್ನು ಮೀರಿಸಬಾರದು ಎಂದು ಮೊರಾರ್ಜಿ ನಮ್ಮಪ್ಪ ಎಂದು ಹೇಳಿ embarrass ಆದವನು.  ನನ್ನ ಬ್ಲಾಗ್ ನ “ಹಳೇ ಸೇತುವೆ” ಹೆಸರು ಕೆಲವರಿಗೆ ಹಿಡಿಸಿತೂ ಕೂಡಾ, ಅದರೊಂದಿಗೆ ಸವಾರಿಯಾಗಿ ಬಂದ ಬ್ಲಾಗ್ ಪೋಸ್ಟ್ ಗಳೂ ಕೆಲವರಿಗೆ ಇಷ್ಟವಾದವು. ಇನ್ನೂ ಕೆಲವರಿಗೆ “ತುಂಬಾ” ಇಷ್ಟವಾಗಿ ಅಜೀರ್ಣಕ್ಕೂ ದಾರಿ ಮಾಡಿ ಕೊಟ್ಟಿತು. ಒಂದಂತೂ ಸತ್ಯ, ಮೆಚ್ಚಿದವರು, ಮೆಚ್ಚದವರು ನನ್ನಲ್ಲಿ ಹುರುಪನ್ನಂತೂ ತುಂಬಿದರು ನನ್ನ ಬರಹ ಮುಂದುವರೆಯಲಿ ಎಂದು. ಕನ್ನಡಿಗ ಉದಾರಿ, ಸಹೃದಯಿ ಎನ್ನುವ ಮಾತಿಗೆ ನನ್ನ ಬಡ, ಸುಣ್ಣದ ಕಲ್ಲಿನ ಸೇತುವೆಗೆ ಬಂದ ಪ್ರತಿಕ್ರಿಯೆಗಳೇ ಸಾಕ್ಷಿ.   

ಮೆಚ್ಚಿದವರಿಗೂ, ಮೆಚ್ಚದವರಿಗೂ ನನ್ನ ಸವಿನಯ, ಗೌರವಪೂರ್ವಕ  ಪ್ರಣಾಮಗಳು.

ಶುಂಠಿ, ನೊಬೆಲ್, “ಸಪ್ಲೈ ಮತ್ತು ಡಿಮಾಂಡ್”

ಅರ್ಥಶಾಸ್ತ್ರದಲ್ಲಿ ಈ ವರುಷದ ನೊಬೆಲ್ ಪ್ರಶಸ್ತಿ ಮೂರು ಜನರಿಗೆ. Massachusetts Institute of Technology ಯ ಪೀಟರ್ ಡಯಮಂಡ್, Northwestern University ಯ ಡೇಲ್ ಮಾರ್ಟನ್ಸನ್, ಮತ್ತು London School of Economics ನ ಕ್ರಿಸ್ಟಾಫರ್ ಪಿಸ್ಸಾರಿಡ್ಸ್, ಪ್ರಶಸ್ತಿ ಯನ್ನು ಮೂರು ಪಾಲು ಮಾಡಿಕೊಂಡ ಅರ್ಥಶಾಸ್ತ್ರಜ್ಞರು ತಮ್ಮ ಪ್ರತಿಭೆಯ ಆಧಾರದ ಮೇಲೆ. ಏಕೆ ಸಿಕ್ಕಿತು ಈ ತ್ರಿಮೂರ್ತಿಗಳಿಗೆ ನೊಬೆಲ್? ಪೂರೈಕೆ ಮತ್ತು ಬೇಡಿಕೆ – supply and demand – ಮೇಲಿನ ಅಧ್ಯಯನಕ್ಕೆ ಲಭಿಸಿತು ಇವರುಗಳಿಗೆ ವಿಶ್ವದ ಅತ್ಯುನ್ನತ ಪ್ರಶಸ್ತಿ ನೊಬೆಲ್. ೧೯೭೦ ರ ದಶಕದಲ್ಲಿ ಮುಂದುವರಿದ ರಾಷ್ಟ್ರಗಳಿಗೆ “ತೈಲ ಸಂಕಷ್ಟ” ದ ನಂತರ ಎದುರಾದ ಮತ್ತೊಂದು ಸಮಸ್ಯೆ ನಿರುದ್ಯೋಗ. ನಿರುದ್ಯೋಗ, ಉದ್ಯೋಗದ ಲಭಿಕೆ ಮತ್ತು ವೇತನ, ಈ ಮೂರು ಅಂಶಗಳು ಒಂದಕ್ಕೊಂದು ತಳುಕು ಹಾಕಿಕೊಂಡು ವಿಶ್ವದ ಸರಕಾರಗಳಿಗೆ ಒಂದು ಸವಾಲಾಗಿತ್ತು. ಈ ಸಮಸ್ಯೆ ಹೇಗೆಂದರೆ ಕೆಲಸ ಕೊಡುವ ಧಣಿಗೆ ಕೆಲಸಗಾರರು ಸಿಗುವುದಿಲ್ಲ, ಕೆಲಸಗಾರಿಗೆ ಕೆಲಸ ಕೊಡುವ ಧಣಿ ಸಿಗುವುದಿಲ್ಲ. ಒಂದು ರೀತಿಯ catch 22 ಪರಿಸ್ಥಿತಿ. ಈ ಪರಿಸ್ಥಿತಿಯಿಂದ ಹೇಗೆ ಹೊರಬರಬಹುದು ಎಂದು ತೋರಿಸಿ ಕೊಟ್ಟರು ಈ ತ್ರಿಮೂರ್ತಿ ವಿಧ್ವಾಂಸರುಗಳು. “ಉದ್ಯೋಗಗಳಿದ್ದೂ ನಿರೋದ್ಯೋಗ” ಸಮಸ್ಯೆಗೆ ಪರಿಹಾರ ಕಾಣುವ ನಿಟ್ಟಿನಲ್ಲಿ ನಡೆಸಿದ ಇವರುಗಳ ಅಧ್ಯಯನ ಮತ್ತು ಪರಿಹಾರ ವಿಶ್ವ ಸರಕಾರಗಳಿಗೆ ನೆರವಾಗುತ್ತದಂತೆ.

“ಸಪ್ಲೈ ಮತ್ತು ಡಿಮಾಂಡ್”ಎಂದರೇನು? ಬಹುತೇಕ ಜನರಿಗೆ ತಿಳಿದದ್ದೇ ಇದು, ಆದರೂ ದಿನ ನಿತ್ಯ ನಮಗೆ ಕಾಣ ಸಿಗುವ ಉದಾಹರಣೆಗಳ ಮೂಲಕ ಅರ್ಥೈಸಿ ಕೊಳ್ಳೋಣ ಈ phenomenon ಅನ್ನು. ಮೇಲೆ ಹೇಳಿದ “ಉದ್ಯೋಗಗಳಿದ್ದೂ ನಿರೋದ್ಯೋಗ” ಗೆ ಸಂಬಂಧಿಸಿದ ಅನುಭವವಲ್ಲ ಕೆಳಗಿನದು. ಇದು ೧೯೮೪ ರ ಮಾತು.

ಒಮ್ಮೆ ತರಕಾರಿಗೆಂದು ಭದ್ರಾವತಿಯ ಪುರಸಭೆ ಒಡೆತನದ (ನಿಜವಾದ ಒಡೆಯ ರೈಲ್ವೆ ಅಂತೆ, ಈಗ ಅದನ್ನು ನೆಲಸಮಗೊಳಿಸಿದ್ದಾರೆ ರಸ್ತೆ ಅಗಲೀಕರಣದ ಕಾರಣ ಒಡ್ಡಿ ) ಮಾರುಕಟ್ಟೆಗೆ ಹೋಗಿದ್ದೆ. ಪರಿಚಯದ ಕೇರಳ ಮೂಲದ ಅಂಗಡಿಯವ ಹೇಳಿದ ಹೇ, ಶುಂಠಿ ತಗೊಂಡು ಹೋಗು, ಈ ಶುಂಠಿ ಮಾರಿಯೇ ನಿನ್ನ ಮಾವನಿಗೆ ವರದಕ್ಷಿಣೆ ಕೊಟ್ಟಿದ್ದು ಹೆಣ್ಣಿನ ಕಡೆಯವರು ಎಂದು. ನನಗೆ ಅರ್ಥವಾಗಲಿಲ್ಲ, ಆತ ಬಿಡಿಸಿ ಹೇಳಿದ. ಆ ಸಮಯದಲ್ಲಿ ರಾಜ್ಯದಲ್ಲಿ ಶುಂಠಿಗೆ ಬಂತು ಬರ, ಶುಂಠಿ ಬೆಳೆದು ಗುಡ್ಡ ಹಾಕಿದವನೇ ಶ್ರೀಮಂತ. ಲಾಟರಿ ಹೊಡೆದಂತೆ. ನನ್ನ ಅತ್ತೆಯ ಮನೆಯವರು ಜಮೀನ್ದಾರರು. ಅವರ ಲಕ್ ಖುಲಾಯಿಸಿದ್ದರಿಂದ ಎಲ್ಲಾ ಬಿಟ್ಟು ಅಂಕು ಡೊಂಕಾಗಿ ತರಕಾರಿಯಲ್ಲಿ ಶುದ್ಧ ಕುರೂಪಿಯಾದ ಶುಂಠಿಯನ್ನು ಬೆಳೆದರು ತಮ್ಮ ಹೊಲದ ತುಂಬಾ. ಬಂತು ಒಳ್ಳೆ ಬೆಲೆ, ಮಾರಿದ್ದೇ ಮಾರಿದ್ದು. ಶುಂಠಿ ಇಲ್ಲದ ಮಾರುಕಟ್ಟೆಯಲ್ಲಿ ಶುಂಠಿ ಇಟ್ಟುಕೊಂಡವನೇ “ಶಾಣ”. ಶುಂಠಿ ಬೆಳೆದವ ವಿಜಯದ ನಗೆ ಬೀರಿದ. ಜೇಬು ತುಂಬಿಸಿಕೊಂಡ. ಈಗಲೂ ನೋಡಿ, ಆ ಪಕ್ಷದಿಂದ ಈ ಪಕ್ಷ ಎಂದು ನೆಗೆಯುವ ನಾಚಿಕೆಗೆಟ್ಟ ಶಾಸಕ, ರಾಜಕಾರಣಿಯಂತೆ ನಮ್ಮ ರೈತರೂ ಒಲಾಡುತ್ತಾರೆ, ಒಮ್ಮೆ ಕಬ್ಬು ಎಂದರೆ, ಮತ್ತೊಮ್ಮೆ ಅಡಿಕೆ, ಮಗುದೊಮ್ಮೆ ರೇಶಿಮೆ, ಬಾಳೆ ಹೀಗೇ. ಯಾವುದಕ್ಕೆ ಮಾರುಕಟ್ಟೆಯಲ್ಲಿ ಕ್ಷಾಮವಿರುತ್ತದೋ ಅದನ್ನು ಪೂರೈಸಿದಾಗ ಸಿಗುವ ಲಾಭದ ಮೇಲೆ ಕಣ್ಣಿಟ್ಟು ಬೆಳೆಯುತ್ತಾರೆ ಉತ್ಪನ್ನಗಳನ್ನು.

ಇದು ನಾನು ಅರ್ಥೈಸಿ ಕೊಂಡ supply demand story.