ಈಗ ಅತ್ಯಾಚಾರ ‘ಕಾಮನ್ ಫೆನಾಮೆನಾ’ ನಮ್ಮ ದೇಶದಲ್ಲಿ

ಈಗ ಅತ್ಯಾಚಾರ ಕಾಮನ್ ಫೆನಾಮೆನಾ ನಮ್ಮ ದೇಶದಲ್ಲಿ. ಟೈಮ್ಸ್ ಆಫ್ ಇಂಡಿಯಾ ದ ಆನ್ ಲೈನ್ ಆವೃತ್ತಿಯ ಮಧ್ಯ ಭಾಗದ ಸುದ್ದಿ ಯಲ್ಲಿ ದಿನವೂ ರಾರಾಜಿಸುವ ಚಟುವಟಿಕೆ ಈ ರೇಪು ಎನ್ನುವ ಅಸಹ್ಯ ಹುಟ್ಟಿಸುವ perversion. ಇದಕ್ಕೆ ಮುಖ್ಯ ಕಾರಣ ಎಂದರೆ ರೇಪಿಗೆ ತಕ್ಕ ಶಿಕ್ಷೆಯ ಕೊರತೆ ಅದರೊಂದಿಗೇ ಈ ನೀಚ ಕೃತ್ಯಕ್ಕೆ ಮಹಿಳೆಯನ್ನು ಹೊಣೆಯಾಗಿಸುವ  ನಾಚಿಕೆಗೆಟ್ಟ ವರ್ತನೆ. ಮಹಿಳೆ ಸರಿಯಾಗಿ ಬಟ್ಟೆ ಉಡಲು ಅಸಮರ್ಥಳಾದರೆ ರೇಪ್ ಬಂದು ಎರಗುತ್ತದೆ ಎನ್ನುವುದು ಬಹಳಷ್ಟು ಜನರ ವಕ್ರ ನ್ಯಾಯ. ವಯಸ್ಕ, ಹದಿಹರೆಯದ ಹೆಣ್ಣಿನ ಉಡುಗೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡುವುದಾದರೆ ಒಂದೂವರೆ, ಎರಡು, ಮೂರು ವರ್ಷದ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರಕ್ಕೆ ಏನು ಸಮಜಾಯಿಷಿ?

ಇಂದು ೧೧ ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಕೊಲ್ಲಲಾಯಿತು. ಈ ಅಮಾನುಷ ಕೃತ್ಯಗಳು ನಾಗರೀಕ ಸಮಾಜದ ಕಣ್ಣು ತೆರೆಸಲು ವಿಫಲ ವಾಗುತ್ತಿರುವುದು ದಿಗಿಲನ್ನು ಹುಟ್ಟಿಸುತ್ತಿದೆ. ನನ್ನ ಪ್ರಕಾರ ಅತ್ಯಾಚಾರ ಭ್ರಷ್ಟಾಚಾರಕ್ಕಿಂತ ಕೀಳು, ಅಸಹ್ಯ. ಅತ್ಯಾಚಾರದ ವಿರುದ್ಧ ಅಣ್ಣಾ ಹಜಾರೆ, ಕೇಜರಿವಾಲ (ನಾನು ಈತನ ಫ್ಯಾನ್ ಅಲ್ಲ) ನಂಥವರು ಧ್ವನಿ ಎತ್ತುತ್ತಿಲ್ಲ?

ಅತ್ಯಾಚಾರಕ್ಕೆ ಮಹಿಳೆಯ ಉಡುಗೆ ಕಾರಣ ಎಂದು ಬರೀ ಜನ ಸಾಮಾನ್ಯನ ಅಭಿಪ್ರಾಯ ಮಾತ್ರವಲ್ಲ ಮಂತ್ರಿ ಮಹೋದಯರೂ, ಪೊಲೀಸ್ ಅಧಿಕಾರಿಗಳೂ ಈ ಮಾತಿಗೆ ಧ್ವನಿಗೂಡಿಸುತ್ತಾರೆ.  ಈಗ ಹರಿಯಾಣ ರಾಜ್ಯದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲ ಕೊಡುವ ಸಲಹೆ ಏನೆಂದರೆ ಹೆಣ್ಣು ಗಂಡುಗಳ ವಿವಾಹಾರ್ಹ ವಯಸ್ಸನ್ನು ಇಳಿಸಬೇಕು ಎನ್ನುವುದು. ಒಂದು ಕಡೆ ಸರಿಯಾಗಿ ಬಟ್ಟೆ ತೊಡು ಇಲ್ಲಾ ಮಾನ ಕಳೆದು ಕೊಳ್ಳಲು ತಯಾರಾಗು ಎನ್ನುವ ಎಚ್ಚರಿಕೆಗೆ ಮದುವೆ ವಯಸ್ಸನು ಇಳಿತ ಮಾಡಿದರೆ ರೇಪ್ ದರದಲ್ಲಿ ಕಡಿತ ಬರಬಹುದು ಎನ್ನುವ ವಾದಕ್ಕೆ ಜೋಡಿ ಎನ್ನುವಂತೆ ಬರುತ್ತಿದೆ ಮಂತ್ರಿಯ ಸಲಹೆ. ಈ ಮಾತಿನೊಂದಿಗೆ ಈ ಮು. ಮಂತ್ರಿ ಮುಘಲರನ್ನೂ ಎಳೆದು ತರುತ್ತಾನೆ. ಕುಣಿಯಲು ಬಾರದವಳು ನೆಲ ಡೊಂಕು ಎಂದಳಂತೆ, ಆಳನು ಬಾರದವನು ಮುಘಲರನ್ನು, ಪೋರ್ಚುಗೀಸರನ್ನು ಹೊನೆಯಾಗಿಸುತ್ತಾನೆ ತನ್ನ ಹೊಣೆಗೇಡಿತನಕ್ಕೆ.

ಒಟ್ಟಿನಲ್ಲಿ ಸಮಾಜದ ನಿಲುವು ಇಷ್ಟೇ. ಏನೇ ಆಗಲಿ, ಏನೇ ಬರಲಿ, ನಾವು ಮಾತ್ರ ನಮ್ಮ ಗಂಡು ಮಕ್ಕಳಿಗೆ ನೈತಿಕತೆಯ ಪಾಠ ಹೇಳೋಲ್ಲ, ಪರ ಹೆಣ್ಣನ್ನು ಗೌರವದಿಂದ ಕಾಣಲು ಉತ್ತೇ ಜಿಸೋಲ್ಲ ಎನ್ನುವ ಹೊಟ್ಟೆ ತೊಳೆಸುವಂಥ ಮೊಂಡುತನ. ನಮ್ಮ ಸಂಸ್ಕಾರ ಅಂಥದ್ದು, ಇಂಥದ್ದು ಎಂದು vainglorious ಆಗಿ ಕಣ್ಣು ಮುಚ್ಚಿ, ಎದೆಯುಬ್ಬಿಸಿ ನಡೆದರೆ ಸಾಲದು. ಅತ್ಯಾಚಾರದಂಥ ಅವಮಾನಕಾರೀ ಸಾಮಾಜಿಕ ಪಿಡುಗಿಗೆ ಇತಿಶ್ರೀ ಹಾಡಲೇ ಬೇಕು.              

ರಾಜಕಾರಣದಲ್ಲಿ ಧರ್ಮ ಎಷ್ಟಿರಲಿ?

“ನಾವು ಒಂದು ಕ್ರೈಸ್ತ ರಾಷ್ಟ್ರ, ಇದನ್ನು ಹೇಳಲು ನಾವು ಭಯ ಪಡಬೇಕಿಲ್ಲ ” – ಈ ಮಾತನ್ನು ಕ್ರೈಸ್ತ ಮೂಲಭೂತವಾದಿ ಇವಾನ್ಜೆಲಿಸ್ಟ್ (ಧರ್ಮಪ್ರಚಾರಕ) ಜೆರ್ರಿ ಫಾಲ್ವೆಲ್, ಅಥವಾ ಟೆರ್ರಿ ಜೋನ್ಸ್ ರಂಥವರು ಹೇಳಿದ್ದರೆ ಚಿಂತೆ ಇರಲಿಲ್ಲ, ಏಕೆಂದರೆ ಇವರುಗಳು ಹೀಗೆ ಮಾತನಾಡಿದಾಗಲೇ ಚೆನ್ನ. ಅಸಹನೆಯೇ ಅವರ ಉಸಿರು, ಹಾಗಾಗಿ ಅವರ ಬಾಯಲ್ಲಿ ನೀಟ್ ಆಗಿ ಫಿಟ್ ಅಗೋ ಮಾತುಗಳು ಅವು. ಆದರೆ ಈ ಮಾತನ್ನು ಸೆಕ್ಯುಲರ್ ದೇಶ ಎಂದು ಹೆಮ್ಮೆ ಪಡುವ ಬ್ರಿಟನ್ ದೇಶದ ಪ್ರಧಾನಿ ಹೇಳಿದ್ದು ಎಂದಾದ ಮೇಲೆ ಈ ಮಾತಿನ ಕಡೆ ಸ್ವಲ್ಪ ಗಮನ ಅತ್ಯಗತ್ಯ.

“ಕಿಂಗ್ ಜೇಮ್ಸ್” ಬೈಬಲ್ ನ ೪೦೦ ವಾರ್ಷಿಕೋತ್ಸವದ ವೇಳೆ ‘ಚರ್ಚ್ ಆಫ್ ಇಂಗ್ಲೆಂಡ್’ ಗೆ ಸೇರಿದ ಪಾದ್ರಿಗಳನ್ನು ಉದ್ದೇಶಿಸಿ ಈ ಮಾತನ್ನು ಹೇಳಿದರು ಡೇವಿಡ್ ಕೆಮರೂನ್. ಇದೇ ಮಾತನ್ನು ನಮ್ಮ ದೇಶದ ಪ್ರಧಾನಿ ಹೇಳಿದ್ದಿದ್ದರೆ ಆಗುತ್ತಿದ್ದ ವೈಚಾರಿಕ ಅನಾಹುತ ಏನು ಎಂದು ಊಹಿಸಲು ಅಸಾಧ್ಯ. ಆದರೆ ಇಷ್ಟು ಮಾತ್ರ ಹೇಳಿ ಸುಮ್ಮನಾಗಲಿಲ್ಲ ಪ್ರಧಾನಿ. “ನಾವು ಒಂದು ಕ್ರೈಸ್ತ ರಾಷ್ಟ್ರ, ಇದನ್ನು ಹೇಳಲು ನಾವು ಭಯ ಬೀಳಬೇಕಿಲ್ಲ… ನನ್ನನ್ನು ಅರ್ಥ ಮಾಡಿಕೊಳ್ಳಿ… ಮತ್ತೊಂದು ಧರ್ಮ ಅಥವಾ ಧರ್ಮವಿಲ್ಲದಿರುವಿಕೆಯ ವ್ಯವಸ್ಥೆ ಇರುವುದು ತಪ್ಪು ಎಂದು ನಾನು ಖಂಡಿತಾ ಹೇಳುತ್ತಿಲ್ಲ” ಇದು ಪ್ರಧಾನಿಗಳ ಪೂರ್ತಿ ಮಾತುಗಳು. ಈಗ ಸ್ವಲ್ಪ ಸಮಾಧಾನ. ಏಕೆಂದರೆ ಬ್ರಿಟನ್ ಬರೀ ಕ್ರೈಸ್ತರ ದೇಶವಲ್ಲ, ಅಲ್ಲಿ, ಹಿಂದೂಗಳೂ, ಮುಸ್ಲಿಮರೂ, ಯಹೂದಿಗಳೂ ಇನ್ನಿತರ ಹಲವು ಧರ್ಮೀಯರೂ, ಧರ್ಮವಿಲ್ಲದವರೂ ಸಾಮರಸ್ಯದಿಂದ ಬದುಕುವ ದೇಶ. ಹಾಗಾಗಿ ಎಲ್ಲರೂ, ಧರ್ಮವಿಲ್ಲದವರೂ, ತಾರತಮ್ಯವಿಲ್ಲದೆ ಸಮಾನಾವಕಾಶಗಳೊಂದಿಗೆ ಬದುಕಬಹುದು ಎನ್ನುವ ಆಶಯ ಪ್ರಧಾನಿಯದು. ಅದೇ ಅವರ ನಿರೀಕ್ಷೆಯೂ ಕೂಡಾ. ಆದರೆ ರಾಜಕಾರಣದಲ್ಲಿ ಧರ್ಮದ ಪಾತ್ರ ಎಷ್ಟಿರಬೇಕು ಎನ್ನುವುದು ಮುಗಿಯದ ಚರ್ಚೆ. “ರಾಜಕಾರಣ ಧರ್ಮವಲ್ಲ, ಅಥವಾ ಹಾಗೇನಾದರೂ ಆಗುವುದಾದರೆ ಅದು inquisition ಅಲ್ಲದೇ ಮತ್ತೇನೂ ಅಲ್ಲ” ಎಂದು ನೊಬೆಲ್ ಪ್ರಶಸ್ತಿ ವಿಜೇತ ಸಾಹಿತಿ, ದಾರ್ಶನಿಕ ಅಲ್ಬರ್ಟ್ ಕ್ಯಾಮು ಹೇಳುತ್ತಾರೆ ( Politics is not religion, or if it is, then it is nothing but the Inquisition – albert camus, french philosopher).

Inquisition ಎಂದ ಕೂಡಲೇ ಕಣ್ಣ ಮುಂದೆ ಬರೋದು ವ್ಯಾಟಿಕನ್ ಬೆಂಬಲಿತ ಸಾಮೂಹಿಕ ಹಿಂಸೆ, ಬರ್ಬರ ಶಿಕ್ಷೆ. ಕ್ರೈಸ್ತರಲ್ಲದವರೂ, ಕ್ಯಾಥೊಲಿಕ್ ಧರ್ಮದ ಚೌಕಟ್ಟಿಗೆ ಬರದ ಕ್ರೈಸ್ತರೂ inquisition ನ ಬರ್ಬರತೆ ಅನುಭವಿಸಿದರು. ಹಾಗಾಗಿ ರಾಜಕಾರಣದಲ್ಲಿ ಧರ್ಮ ಕೂಡದು ಎಂದು ಪಾಶ್ಚಾತ್ಯ ರಾಷ್ಟ್ರಗಳ ನಿಲುವು. ಇದು ಬರೀ ನಿಲುವು ಮಾತ್ರ, ಯಥಾಸ್ಥಿತಿ ಬೇರೆಯೇ ಎಂದು ದಿನನಿತ್ಯದ ವಿದ್ಯಮಾನಗಳು ನಮಗೆ ಹೇಳುತ್ತವೆ. ಪಾಶ್ಚಾತ್ಯ ದೇಶಗಳಲ್ಲಿ ಬಲ ಪಂಥೀಯ ಇವಾನ್ಜೆಲಿಸ್ಟ್ ಗಳು ದೊಡ್ಡ ಪಾತ್ರ ವಹಿಸುತ್ತಿದ್ದಾರೆ. ಈಗ ಅಧ್ಯಕ್ಷೀಯ ಚುನಾವಣೆಯ ಪ್ರಾಥಮಿಕ ಹಂತದಲ್ಲಿರುವ ಅಮೆರಿಕೆಯಲ್ಲಿ ಇವರ ಅಬ್ಬರ ತುಸು ಹೆಚ್ಚು. ರಾಜಕಾರಣಿಗಳ ಕೈಗೆ ಧರ್ಮ ಸಿಕ್ಕಾಗ ಅದು ಚಿನ್ನದ ಸೌಂದರ್ಯ ಕಳೆದು ಕೊಂಡು ಕಳಪೆ ಉಕ್ಕಿನ ರೂಪ ಪಡೆದು ಕೊಳ್ಳುತ್ತದೆ ಎನ್ನುತ್ತಾರೆ ಲೇಖಕಿ ಯಾಸ್ಮೀನ್ ಅಲಿ ಭಾಯಿ. ಈಕೆ ಬ್ರಿಟನ್ ದೇಶದ ಪ್ರಸಿದ್ಧ ಲೇಖಕಿ. ಆಕರ್ಷಕ ಹೆಸರುಗಳೊಂದಿಗೆ ರಾಜಕಾರಣದಲ್ಲಿ ಧರ್ಮವನ್ನು ನುಸುಳಿಸಲು ಹವಣಿಸುವವರಿಗೆ ಈ ಮಾತುಗಳು ಬಹುಶಃ ಪಥ್ಯವಾಗಲಾರದು.

ಧರ್ಮದ ಸಾರವನ್ನು, ಸತ್ವವನ್ನು ಸಂಪೂರ್ಣವಾಗಿ ಅರಿತ ಹಿಂದೂ, ಮುಸ್ಲಿಂ, ಕ್ರೈಸ್ತ ಇನ್ನಿತರ ಧಮೀಯರಿಂದ ಯಾವುದೇ ತೊಂದರೆಯಿಲ್ಲ, ಆದರೆ ಅರೆಬರೆ ಕಲಿತು ‘ಪಾರ್ಟ್ ಟೈಂ’ ಧರ್ಮಾನುಯಾಯಿಗಳಿಂದ ಗಂಡಾಂತರ ಹೆಚ್ಚು ಎಂದು ಚಾರಿತ್ರಿಕ ಘಟನೆಗಳು ಸಾಕ್ಷಿಯಾಗಿವೆ. ಧರ್ಮವನ್ನು ‘ಆಫೀಮ್’ ಎಂದು ಕಡೆಗಣಿಸುವುದಾಗಲೀ, ತನ್ನ ಧರ್ಮವೇ ಶ್ರೇಷ್ಠ ಎಂದು ಇತರರ ಬದುಕನ್ನು ದುರ್ಭರಗೊಳಿಸುವುದಾಗಲೀ ಕೂಡದು ಎನ್ನುವ ವಿವೇಚನೆಯಿದ್ದರೆ ಸಾತ್ವಿಕ ಬದುಕು ಸರಾಗ, ವೈಯಕ್ತಿಕ ಬದುಕಿನಲ್ಲೂ, ರಾಜಕೀಯ ಕ್ಷೇತ್ರದಲ್ಲೂ.

ಗೋ ಹತ್ಯೆ ನಿಷೇಧಿಸಿ

ದೇಶದ ಸಮಯ, ಸಂಪನ್ಮೂಲಗಳನ್ನು ನುಂಗುತ್ತಿರುವ ಹಲವು ತಗಾದೆಗಳಲ್ಲಿ ಗೋ ಹತ್ಯೆ ಒಂದು. ಹಿಂದೂಗಳು ಪವಿತ್ರ, ಮಾತೆ ಎಂದು ಆದರಿಸಲ್ಪಡುವ, ಗೌರವಿಸಲ್ಪಡುವ ಗೋವಿನ ಮತ್ತು ಅದನ್ನು ಸಂರಕ್ಷಿಸಬೇಕಾದ ವಿಧಾನಗಳ ಬಗ್ಗೆ ಚರ್ಚೆಗೆ ಶತಮಾನಗಳ ಇತಿಹಾಸ ಇದೆ. ಸಾಕಷ್ಟು ನೆತ್ತರೂ ಹರಿದಿದೆ. ದೇಶವನ್ನು ಕಿತ್ತು ತಿನ್ನುವ ಸಮಸ್ಯೆಗಳಿಗೆ ರಾಜಕಾರಣದ ಲೇಪನ ಇಲ್ಲದಿದ್ದರೆ ಅದಕ್ಕೆ ಮಹತ್ವವಾಗಲೀ, ಮೋಜಾಗಲೀ ಇರುವುದಿಲ್ಲ. ಗೋ ವಿನ ವಿಷಯದಲ್ಲೂ ಆಗಿದ್ದೂ ಇದೇ.  ಗೋ ಮಾಂಸ ಭಕ್ಷಕರೆಂದು ಪರಿಗಣಿಸಲ್ಪಡುವ, ಮುಖ್ಯವಾಗಿ ಕ್ರೈಸ್ತರು ಮತ್ತು ಮುಸ್ಲಿಮರಿಗೆ, ಗೋ ಮಾಂಸವನ್ನು ಅವರ ಮೆನ್ಯು (menu) ಪಟ್ಟಿಯಿಂದ ತೆಗೆದುಬಿಟ್ಟರೆ ಆಕಾಶ ಕಳಚಿ ಬೀಳೋಲ್ಲ. ಹೃದಯದ  clogged arteries ಗಳಿಗೆ ಮಾತ್ರ ದೊಡ್ಡ ಪ್ರಯೋಜನವಾಗುತ್ತದೆ ಈ ಮಾಂಸ ಮೆನ್ಯು ವಿನಿಂದ ಹೊರಗುಳಿದರೆ.

ಈಗ ಪ್ರವೇಶ ರಾಜಕಾರಣ. ಎಂಟರ್ ದಿ ಡ್ರಾಗನ್ ಥರ. ಅಪಾಯಕಾರಿ ಆದರೂ ಒಂದಿಷ್ಟು ಸೀಟುಗಳನ್ನು ಅಥವಾ ಅಧಿಕಾರದ ಗದ್ದುಗೆಯನ್ನು ತರಲು ಸಹಕಾರಿಯಾದರೆ ಗೋವನ್ನು ಮಾತ್ರವಲ್ಲ ಯಾರನ್ನು ಬೇಕಾದರೂ ಬಲಿ ಕೊಡಲು ಸಿದ್ಧ. ಗೋಮಾಂಸ ನಿಷೇಧಿಸಿದರೆ ಅಲ್ಪಸಂಖ್ಯಾತರ ಆಹಾರ ಪದ್ಧತಿ ಯಲ್ಲಿ ಹಸ್ತಕ್ಷೇಪ ನಡೆಸಿದಂತೆ ಎಂದು ರಗಳೆ ಇವರದು. ಗೋ ಮಾಂಸ ತಿಂದೇ ಸಿದ್ಧ ಎಂದು ಪಟ್ಟು ಹಿಡಿಯುವ ಅಲ್ಪತನ ಅಲ್ಪ ಸಂಖ್ಯಾತರು ತೋರಿಸರು ಎನ್ನುವ ಪ್ರಜ್ಞೆ ಇವರಿಗಿಲ್ಲ, ಆಳುವ ಮಂದಿಗೆ. ಗೋ ಮಾಂಸ ನಿಷೇಧಿಸಿ ಬಿಟ್ಟರೆ ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬಂದೀತು ಎನ್ನುವ ಅತಂತ್ರ, ಅಭದ್ರ ಮನಸ್ಥಿತಿಯವರೂ ಅಲ್ಲ ಮುಸ್ಲಿಮರು ಅಥವಾ ಕ್ರೈಸ್ತರು. ಮತ್ತೇಕೆ ಈ ಸಮಸ್ಯೆ ಆಗಾಗ ತಲೆ ಎತ್ತುತ್ತಾ ಇರುತ್ತದೆ ಎನ್ನುವುದು ಯಕ್ಷ ಪ್ರಶ್ನೆ.

ಗೋ ಹತ್ಯೆ ಬಹುಸಂಖ್ಯಾತ ವರ್ಗದವರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವುದಾದರೆ ಖಂಡಿತಾ ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ತಂದೇ ತೀರಬೇಕು. ಗೋ ಹತ್ಯಾ ನಿಷೇಧ ಕೂಡದು ಎನ್ನುವ ಕಾಂಗ್ರೆಸ್ಸಿಗರು ಮುಸ್ಲಿಮರ ಓಟಿಗಾಗಿ ದೊಂಬರಾಟ ನಡೆಸೋದು ನಿಲ್ಲಿಸಬೇಕು. ಮುಸ್ಲಿಮರಿಗೆ ಗೋ ಮಾಂಸ ತಿನ್ನಲೇ ಬೇಕೆನ್ನುವ ನಿಯಮವೇನಿಲ್ಲ. ದಿನ ಪೂರ್ತಿ ಇದರ ಜಪ ಮಾಡುತ್ತಾ ಕೂರುವ ವ್ಯವಧಾನವೂ ಇಲ್ಲ ಅವರಲ್ಲಿ. ಅವರಿಗೆ (ಮುಸ್ಲಿಮರಿಗೆ) ತಲೆಕೆಡಿಸಿ ಕೊಳ್ಳಬೇಕಾದ ನೂರೊಂದು ವಿಷಯಗಳಿವೆ. ಮುಸ್ಲಿಂ ಧರ್ಮೀಯ ಸಸ್ಯಾಹಾರಿಯಾಗಲು ಧರ್ಮದ ಅಡ್ಡಿಯಿಲ್ಲ. ನಿಷೇಧ ಬೇಡ ಎನ್ನುವ ಕಾಂಗ್ರೆಸ್ಸಿಗರಿಗೆ ಏಕೆ ಗೋವು ಪವಿತ್ರ ಅಲ್ಲ ಅನ್ನೋದು ಒಂದು ಒಗಟು. ಹಾಗೆಯೇ ಗೋವು ಪಾವಿತ್ರ್ಯತೆಯನ್ನು ಪಡೆದು ಕೊಂಡಿದ್ದು ಯಾವಾಗಿನಿಂದ ಎಂದು ಯಾರಾದರೂ ಬೆಳಕು ಚೆಲ್ಲಿದರೆ ಉಪಕಾರ. ಈ ಸಂಬಂಧ ಪ್ರೊಫೆಸರ್ D.N. Jha ರವರು ಬರೆದ the myth of holy cow ಪುಸ್ತಕದಲ್ಲಿ ಗೋಮೇಧ, ಅಶ್ವಮೇಧ ಯಾಗಗಳು, ಗೋಮಾಂಸ ಭಕ್ಷಿಸಿದ ಉದಾಹರಣೆಗಳೊಂದಿಗೆ ವಿಸ್ತೃತವಾದ ಮಾಹಿತಿಗಳಿವೆ.

ಗೋ ಹತ್ಯೆಯ ಬಗ್ಗೆ ಮುಸ್ಲಿಮರಿಗೆ ಇರುವ ತಕರಾರಿಗಿಂತ ಬಹುಸಂಖ್ಯಾತರಿಗೆ ಹೆಚ್ಚು ಆಸಕ್ತಿಕರ ಎನ್ನುವುದು ಕಾಂಗ್ರೆಸ್ಸಿಗರ ಮತ್ತು ಇತರೆ ಪಕ್ಷಗಳವರ ಪ್ರತಿಭಟನೆಗಳಿಂದ ವ್ಯಕ್ತವಾಗುತ್ತದೆ. ಈ ತಗಾದೆಯಿಂದ ಶಾಂತಿ ಪ್ರಿಯ ಭಾರತೀಯರು ಹೊರಗುಳಿದರೆ ದೇಶಕ್ಕೆ ಒಳ್ಳೆಯದು. ಏಕೆಂದರೆ ಇಲ್ಲಿ ನಡೆಯುತ್ತಿರುವುದು ಚರ್ಚೆಗಿಂತ ಸಮುದಾಯಗಳ ನಡುವಿನ ಕಂದಕದ ನಿರ್ಮಾಣದ ಬಗ್ಗೆ ಹೆಚ್ಚಿನ ಆಸಕ್ತಿ ಕಾಣುತ್ತದೆ.     

  

 

ಪಾಕಿಸ್ತಾನದ yorker

ಪಾಕಿಸ್ತಾನದ ವಿದೇಶಾಂಗ ಸಚಿವೆ ಮಾತುಕತೆಗೆಂದು  ಭಾರತಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕಡೆಯಿಂದ ಒಂದು ‘ಯಾರ್ಕರ್’ ನಮ್ಮ ಕಾಲ ಬುಡಕ್ಕೆ ಬಂದು ಬಿದ್ದಿದೆ. ಭಾರತದ ವಿದೇಶಾಂಗ ಸಚಿವ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಮುತ್ಸದ್ದಿಯಾಗಿದ್ದು ಪಾಕ್ ನ ಹೊಸ ವಿದೇಶಾಂಗ ಸಚಿವೆ ಅವರ ಮುಂದೆ ಏನೂ ಅಲ್ಲ ಅನುಭವದಲ್ಲಿ. ಹೀಗೆಂದು ಹೇಳಿದ್ದು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ. ಈ ಅಪರೂಪದ ಹೊಗಳಿಕೆಯ ಮಾತುಗಳು ಪಾಕಿಸ್ತಾನದ ಜಮೀಯತ್ ಉಲೇಮಾ ಪಕ್ಷದ ಫಜ್ಲುರ್ ರಹಮಾನ್ ಬಾಯಿಂದ ಬಿದ್ದಿದ್ದು. ಭಾರತದ ಕೃಷ್ಣ, ಪಾಕ್ ನ ನೂತನ ವಿದೇಶಾಂಗ ಸಚಿವೆ ‘ಹೀನಾ ಖಾರ್’ ರನ್ನು outsmart ಮಾಡುವರು ಎನ್ನುವ ಮಾತಿನ ಹಿಂದೆ ಮಾತುಕತೆಗಳ ಮುನ್ನವೇ ನಮ್ಮನ್ನು outsmart ಮಾಡೋ ಹುನ್ನಾರವೇ ಪಾಕಿಗಳದು? ಪಾಕಿಸ್ತಾನವನ್ನು ನಂಬಿ ಕೆಟ್ಟವರ “ಕ್ಯೂ” ನಮ್ಮ ಪಡಿತರ ಅಂಗಡಿಯ ಮುಂದೆ ಸಕ್ಕರೆಗಾಗಿ ಕಾದು ನಿಲ್ಲುವವರಿಗಿಂತಲೂ ದೊಡ್ಡದು. ಹಾಗಾಗಿ ಪ್ರಶಂಸೆಯ ಮಾತುಗಳೂ ಸಹ ‘ಸ್ಕ್ಯಾನರ್’  ದಾಟಿಯೇ ಹೋಗಬೇಕು. ಇಲ್ಲದಿದ್ದರೆ ಚಳ್ಳೆ ಹಣ್ಣಿನ ಆತಿಥ್ಯ ನಮ್ಮದಾಗುತ್ತದೆ.   

 ಹೀನಾ ರಬ್ಬಾನಿ ಖಾರ್. ಆಧುನಿಕ ಶಿಕ್ಷಣ ಪಡೆದ, ಈ ಮಹಿಳೆ ಪಾಕ್ ರಾಜಕೀಯ ಕ್ಷೇತ್ರ ಪ್ರವೇಶ ಪಡೆದಿದ್ದು ತನ್ನ ತಂದೆಯ ಹೆಸರಿನ ಕಾರಣ. ಸಾಮಾನ್ಯವಾಗಿ ಮಹಿಳೆಯರು ರಾಜಕೀಯಕ್ಕೆ ಪುರುಷರ ನೆರಳಿನಿಂದಲೇ ಬರುವರು ಎನ್ನುವ ಮಾತು ಕೇಳಿ ಬಂದರೂ ಸಾಕಷ್ಟು ಮಹಿಳೆಯರು ಸ್ವ ಸಾಮರ್ಥ್ಯದಿಂದ ಅಧಿಕಾರದ ಚುಕ್ಕಾಣಿ ಹಿಡಿದ್ದಾರೆ. ಬ್ರಿಟನ್ ದೇಶದ ಮಾರ್ಗರೆಟ್ ಥ್ಯಾಚರ್, ತುರ್ಕಿ ದೇಶದ ಮಾಜಿ ಪ್ರಧಾನಿ ತಾಂಸು ಚಿಲ್ಲರ್, ನಮ್ಮ ಮಮತಾ ಬ್ಯಾನರ್ಜೀ ಮುಂತಾದವರು ಸ್ವ ಸಾಮರ್ಥ್ಯದಿಂದ ಜನಬೆಂಬಲ ಪಡೆದು ಕೊಂಡವರು. ಪಾಕಿಸ್ತಾನದ  ಸಂಸತ್ ಸದಸ್ಯರಾಗ ಬೇಕೆಂದರೆ ಪದವೀಧರರಾಗಿರಬೇಕು ಎನ್ನುವ ನಿಯಮವಿದೆ. ಈ ನಿಯಮದ ಕಾರಣ ಪದವೀಧರರಲ್ಲದ ರಾಜಕಾರಣಿಗಳು ತಮ್ಮ ಮಕ್ಕಳನ್ನು ಚುನಾವಣೆಯಲ್ಲಿ ಸ್ಪರ್ದಿಸಲು ಉತ್ತೇಜಿಸುತ್ತಾರೆ. ಹೀಗೆ ಮತ್ತೆ ಇನ್ನಿತರ ರೀತಿಯಲ್ಲಿ ತಮ್ಮ ತಂದೆಯರ ಪ್ರಭಾವ ಬಳಸಿ ರಾಜಕಾರಣ ಪ್ರವೇಶಿಸುವವರು ಹೆಚ್ಚು. ಈ ವ್ಯವಸ್ಥೆಯ ಮುಖಾಂತರ ಹೀನಾ ರಾಜಕಾರಣ ಪ್ರವೇಶಿಸಿದ್ದು.

 ವಿದೇಶಾಂಗ ಖಾತೆಯ ವಿಷಯದಲ್ಲಿ ಪಾಕ್ ಬಹಳ ನಾಜೂಕು, choosy. ಕಳ್ಳರು ತಮ್ಮ ಕಿತಾಪತಿಯಿಂದ ಬೇಸತ್ತ ವಿಶ್ವಕ್ಕೆ ಅವಶ್ಯವಾಗಿ ಬೇಕಾದ ಆರೈಕೆಯನ್ನು ಆಕರ್ಷಕ ವ್ಯಕ್ತಿತ್ವಗಳ ಕೈಯ್ಯಲ್ಲಿ ಮಾಡಿಸುತ್ತಾರೆ. ಪಾಕಿಸ್ತಾನದ ಅಮೆರಿಕೆಯ ರಾಯಭಾರಿ ಯಾಗಿದ್ದ ಮಲೀಹಾ ಲೋಧಿ ಶ್ವೇತ ಭವನದ ಮೇಲೆ ದೊಡ್ಡ ಪ್ರಭಾವ ಬೀರಿದ್ದರು. ಪಾಕಿಸ್ತಾನ ಕಿತಾಪತಿ ಮಾಡಿದಾಗಲೆಲ್ಲಾ ಇನ್ನೇನು ಅಮೇರಿಕಾ ಆ ದೇಶವನ್ನು ಭಯೋತ್ಪಾದಕ ದೇಶ ಎಂದು ಘೋಷಿಸುತ್ತದೆ ಎನ್ನುತ್ತಿದ್ದಂತೆಯೇ ಈಕೆ ತನ್ನ ಮಾತಿನ, ನಗುವಿನ ಪ್ರಭಾವದಿಂದ ತನ್ನ ದೇಶವನ್ನು ಸಂಕಷ್ಟದಿಂದ ಪಾರು ಮಾಡುತ್ತಿದ್ದಳು.  ಜುಲ್ಫಿಕಾರ್ ಅಲಿ ಭುಟ್ಟೋ ಸಹ ಪಾಕ್ ದೇಶದ ಪ್ರತಿಭಾವಂತ ವಿದೇಶಾಂಗ ಸಚಿವರಾಗಿದ್ದರು. ದೇಶದ ವರ್ಚಸ್ಸು, ಹೆಚ್ಚೆಬೇಕೆಂದರೆ ಸಾಮಾನ್ಯವಾಗಿ ವಿದೇಶಾಂಗ ಸಚಿವರುಗಳು ಮತ್ತು ದೊಡ್ಡ ದೊಡ್ಡ ಪ್ರಭಾವಶಾಲೀ ದೇಶಗಳ ರಾಯಭಾರಿಗಳು ಆಕರ್ಷಕ ವ್ಯಕ್ತಿತ್ವವುಳ್ಳವರಾಗಿರುತ್ತಾರೆ. ಇಂಥ ಹುದ್ದೆಗಳ ಆಯ್ಕೆಯಲ್ಲಿ ಸರಕಾರಗಳು ಜಾಗರೂಕವಾಗಿರುತ್ತವೆ.  

 ಕೇವಲ ೩೪ ವರುಷ ಪ್ರಾಯದ ಪಾಕಿಸ್ತಾನದ ನವ ನಿಯುಕ್ತ ವಿದೇಶಾಂಗ ಸಚಿವೆ ಕಂಡಿದ್ದು ಕಾರ್ಗಿಲ್ ಯುದ್ಧ ಮಾತ್ರ. ೨೦೦೫ ರ ಭೂಕಂಪದ ವೇಳೆ ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದು ಬಿಟ್ಟರೆ ಬೇರೆ ಯಾವುದೇ ದೊಡ್ಡ ವಿದೇಶೀ ಅನುಭವ ಈಕೆಯಲ್ಲಿ ಕಾಣುತ್ತಿಲ್ಲ. ೨೦೦೯ ರಲ್ಲಿ ಪಾಕಿಸ್ತಾನದ ಆಯವ್ಯಯ ಪತ್ರವನ್ನೂ ಈಕೆ ಮಂಡಿಸಿದ್ದರು. ವಯಸ್ಸು ೩೨ ಆದರೂ ಈಗಾಗಲೇ ಎರಡು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದಾರೆ.  

ಹಾಗಾಗಿ ಸಾಕಷ್ಟು ಅನುಭವ ಇಲ್ಲದ ಈ ಮಹಿಳೆ ಭಾರತದಲ್ಲಿ ಬಂದು ಯಾವ ರೀತಿಯ ಪ್ರದರ್ಶನ ನೀಡುವರೋ ಎನ್ನುವುದು ಕುತೂಹಲಕರ ಸಂಗತಿ. ಆಕೆಯ ರಾಜಕೀಯ, ಕೌಟುಂಬಿಕ, ಅನುಭವದ ಹಿನ್ನೆಲೆ ಬಗ್ಗೆ ಹೆಚ್ಚು ತಲೆ ಕೆಡಿಸಿ ಕೊಳ್ಳದೆ ನಾವು ಹೇಳಬೇಕಾದ್ದನ್ನು ಸ್ಪಷ್ಟ ಮಾತುಗಳಲ್ಲಿ ಹೇಳಬೇಕು. ಅತಿಥಿ ಎಳೆ ಪ್ರಾಯದವಳು, ಅನುಭವ ಇಲ್ಲದಾಕೆ, ಅತಿಥಿ ಸತ್ಕಾರ, ಹಾಗೆ ಹೀಗೆ ಎಂದು ಸಲೀಸಾಗಿ ನಡೆಸಿಕೊಳ್ಳದೆ ನಮ್ಮ ಹಿತಾಸಕ್ತಿಯನ್ನು ಎಂದಿಗಿಂತ ಸ್ವಲ್ಪ ಜೋರಾಗಿಯೇ ಕಾಯ್ದು ಕೊಂಡರೆ ನಮಗೇ ಹಿತ. ಅಷ್ಟು ಮಾತ್ರ ಅಲ್ಲ, ಇಲ್ಲೊಂದು ‘caveat emptor’ ಸಹ ಇದೆ. ಪಾಕ್ ನ ಈ ವಿದೇಶಾಂಗ ಸಚಿವೆ ಪದವಿ ಪಡೆದಿದ್ದು ಹೋಟೆಲ್ ಮ್ಯಾನೇಜ್ಮೆಂಟ್ನಲ್ಲಿ, ಅದೂ ಅಮೆರಿಕೆಯ ವಿಶ್ವ ವಿದ್ಯಾಲಯದಿಂದ. deadly double. ಈ ಪದವಿ ಪಡೆದವರು ಯಾವಾಗಲೂ ಮುಗುಳ್ನಗುವನ್ನೇ ಧರಿಸಿರುತ್ತಾರೆ, ಒಳ್ಳೆಯ, ಸಿಹಿಯಾದ, ಸತ್ಕಾರದ ಮಾತುಗಳನ್ನೇ ಆಡುತ್ತಾರೆ ಎಂಥ ಸಂದರ್ಭಗಳಲ್ಲೂ. ಹಳಸಿದ ಪುಳಿಯೋಗರೆ ಯನ್ನು ಇದು ತುಂಬಾ delicious ಎಂದು ನಮ್ಮ ಒಲ್ಲದ ಬಾಯಿಗೆ ತುರುಕುವ ಜನ ಈ hospitality management ಗಳಿಸಿದವರು.

ಒಂದು ಕಡೆ ಹಿಲರಿ ಕ್ಲಿಂಟನ್, ಮತ್ತೊಂದು ಕಡೆ ಹೀನಾ ರಬ್ಬಾನಿ, ಇವರಿಬ್ಬರ ನಡುವೆ ನಮ್ಮ ಮುದ್ದು ಕೃಷ್ಣಾ, ಊಹಿಸಿ ನೋಡಿ. ಅಂತಾರಾಷ್ಟ್ರೀಯ ರಾಜಕಾರಣ ಮುಗುಳ್ನಗುವಿನ, ಫೋಟೋ ಶಾಟ್ ಗಳಿಂದ ತುಂಬಿದ ಪಿಕ್ನಿಕ್ ಅಲ್ಲ. ನಲ್ನುಡಿಗಳ land mine ಗಳು ತುಂಬಿರುತ್ತವೆ ಹಾದಿ ಯುದ್ದಕ್ಕೂ. ಇವನ್ನು  ಗುರುತಿಸಿ ನಮ್ಮ ಹಿತಾಸಕ್ತಿ ಕಾಯ್ದು ಕೊಳ್ಳುವುದು ಒಂದು ದೊಡ್ಡ ಸಾಹಸವೇ ಸರಿ. ಈ ಸಾಹಸದಲ್ಲಿ ನಮ್ಮ ಕೃಷ್ಣ ವಿಜಯಿಯಾಗಲಿ.  

 ಚಿತ್ರ ಕೃಪೆ: ibtimes.com

ನಾವು “ಅಕಶೇರುಕ” ರಾಗಿದ್ದು ಎಂದಿನಿಂದ?

ಪಾಕಿಸ್ತಾನ ಅಮೆರಿಕೆಯ ಒಂದು ಪಪ್ಪೆಟ್. ಇದು ಪಾಕಿಸ್ತಾನದ ಸರಕಾರಕ್ಕಿಂತ ಅಲ್ಲಿನ ಜನಕ್ಕೆ ಚೆನ್ನಾಗಿ ಗೊತ್ತು. ತಮ್ಮ ಸರಕಾರಗಳು ಪ್ರತೀ ನಿರ್ಧಾರಕ್ಕೂ ವಾಷಿಂಗ್ಟನ್ ಮೇಲೆ ಪರಾವಲಂಬಿ ರೀತಿ ಅವಲಂಬಿತ ಎಂದು.  ಪಾಕಿಸ್ತಾನ ಒಂದು miserably failed state, ಪಾಕಿಸ್ತಾನದ ಈ degenaration ನೋಡಿ ಕನಿಕರ ಪಡುತ್ತಿದ್ದ ನಮಗೆ ಒಂದು ವಿಚಿತ್ರ ಆದರೆ  ಆಘಾತಕಾರಿಯಾದ ಬೆಳವಣಿಗೆ ಕಾಣಲು ಸಿಕ್ಕಿದೆ. ಒಂದು ಬೆಳಿಗ್ಗೆ ಅಮೆರಿಕೆಯ ದೂತಾವಾಸದ ಸಿಬ್ಬಂದಿಯೊಬ್ಬ ರಸ್ತೆ ಬದಿಯಲ್ಲಿ ನಿಂತಿದ್ದಾಗ ಬೈಕ್ ಬಂದು ನಿಲ್ಲುತ್ತದೆ, ಗುಂಡಿನ ಚಕಮಕಿ ನಡೆಯುತ್ತದೆ, ಬೈಕ್ ಸವಾರರಲ್ಲಿ ಇಬ್ಬರು ಸಾಯುತ್ತಾರೆ ಅಮೆರಿಕೆಯವನನ್ನು ಪೊಲೀಸರು ಬಂಧಿಸುತ್ತಾರೆ. ಪಾಕ್ ಬೀದಿಗಳಲ್ಲಿ  ಬೈಕ್ ನಲ್ಲಿ ಬರುವುದೂ, ಬಂದ ಕೂಡಲೇ ಗುಂಡಿನ ಕಾಳಗ ನಡೆಯುವುದೂ ಸಾಮಾನ್ಯವೇ. ನಾವು ನಮ್ಮ ಚಿತ್ರಗಳಲ್ಲಿ ಕಾಣುವುದನ್ನು ಅಲ್ಲಿ ನಿಜ ಜೀವನದಲ್ಲಿ ಆಡಿ ತೋರಿಸುತ್ತಾರೆ. ಆದರೆ ವಿಷಯದ ಗಾಂಭೀರ್ಯ ಇರುವುದು ಅಮೆರಿಕೆಯವ ಈ ವಿವಾದದಲ್ಲಿ ಸಿಕ್ಕಿ ಬಿದ್ದಿದ್ದು. ಅದೂ ಸಾಧಾರಣ ಅಮೆರಿಕೆಯ ನಾಗರೀಕನಲ್ಲ. ದೂತಾವಾಸದ ಸಿಬ್ಬಂದಿ. ಅವನಿಗೆ ಇದ್ದೇ ಇರುತ್ತದೆ diplomatic immunity. ತನ್ನ ದೇಶದವರು ಸಿಕ್ಕಿಬಿದ್ದಾಗ ಸಹಜವಾಗಿಯೇ ಅಮೆರಿಕನ್ನರು ಕಿಡಿ ಕಿಡಿ ಯಾಗುತ್ತಾರೆ. ಈ ವಿಷಯದಲ್ಲೂ ಸಹ ಅಸಮಾಧಾನ ಗೊಂಡರು. ಮಾಮೂಲಿ ಪ್ರತಿಭಟನೆ ಕೆಲಸ ಮಾಡದಾದಾಗ ಅಮೆರಿಕೆಯಲ್ಲಿನ ಪಾಕ ರಾಜತಾಂತ್ರಿಕ ನನ್ನು ಕರೆಸಿ ನಮ್ಮ ಪ್ರಜೆಯನ್ನು ವಿಮುಕ್ತಿಗೊಳಿಸದಿದ್ದರೆ ನಿನ್ನನ್ನು ಒದ್ದೋಡಿಸುತ್ತೇವೆ ಎಂದು ಧಮಕಿ ಹಾಕಿದರು. ಧಮಕಿ ಕೇಳಿ ಮರಳಿದ ಆತ ನನಗೆ ಅಂಥ ಎಚ್ಹರಿಕೆಯನ್ನೇನೂ ಅಮೇರಿಕಾ ನೀಡಿಲ್ಲ ಎಂದು ಟ್ವೀಟಿಸಿ ಸುಮ್ಮನಾದ. ಆದರೆ ಅಮೇರಿಕ ನೇರವಾಗಿ ಅಲ್ಲಿನ ಸರಕಾರದ ಮೇಲೆ ಪ್ರಭಾವ ತೋರಿಸಲು ತೊಡಗಿತು. ಅಲ್ಲಿನ ಪೊಲೀಸರು ಮಾತ್ರ ಜಪ್ಪಯ್ಯ ಎನ್ನಲಿಲ್ಲ. ಇವನು ದೂತಾವಾಸದ ಅಧಿಕಾರಿ ಅಲ್ಲ, ಬದಲಿಗೆ ಒಬ್ಬ ಗೂಢಚಾರ ಎಂದು ಕರೆದು ಅವನ ಬಳಿಯಿದ್ದ ಆಧುನಿಕ ಉಪಕರಣಗಳ ಹೆಸರುಗಳನ್ನೂ ಪಟ್ಟಿ ಮಾಡಿ ಬಹಿರಂಗಗೊಳಿಸಿದರು, charge sheet ಹಾಕಿ ಅತ್ತೆ ಮನೆಗೂ ಸಹ ಅಟ್ಟಿದರು. ಈ ಘಟನೆ ನಮ್ಮ ದೇಶದಲ್ಲಿ ನಡೆದಿದ್ದರೆ? ಪಾಕಿಸ್ತಾನದ ಗಾಯಕ ಕೋಟ್ಯಂತರ ರೂಪಾಯಿ ಅನಧಿಕೃತವಾಗಿ  ತಂದ ಎಂದು ಬಂಧಿಸಿದ ಕೂಡಲೇ ಅವನನ್ನು ಬಿಡುಗಡೆ ಗೊಳಿಸಲು ಆದೇಶ.   

ಪ್ರಥಮ ಕೊಲ್ಲಿ ಯುದ್ಧದ ವೇಳೆ ಅಮೆರಿಕೆಯ ಯುದ್ಧ ವಿಮಾನಗಳಿಗೆ ಇಂಧನ ಹಾಕಬಾರದು ಎಂದು ನಿರ್ಣಯಿಸಿದ್ದ ನಮ್ಮ  ಸರಕಾರ ಕೊನೆಗೆ ಸದ್ದಿಲ್ಲದೇ ಇಂಧನ ತುಂಬಿಸಿ ಕೊಟ್ಟಿತು. ಬಿಳಿ ನಗು ನಮ್ಮ ಮೇಲೆ ಚೆನ್ನಾಗಿ ಪ್ರಭಾವ ಬೀರುತ್ತದೆ. ಈ ಪಾಠವನ್ನು ಅಮೆರಿಕನ್ನರಿಗೆ ನೀಡಿದ್ದು ನಮ್ಮನ್ನು ೨೦೦ ವರ್ಷ ಗಳ ಕಾಲ ಆಳಿದ ಬ್ರಿಟಿಷರು. ಇರಾನ್ ನಮ್ಮ ದೇಶದ ಆಪ್ತ ಮಿತ್ರ. ಆದರೆ ಇರಾನ ವಿರುದ್ಧದ ಭದ್ರತಾ ಮಂಡಳಿಯ ನಿರ್ಣಯಕ್ಕೆ ಪರವಾಗಿ ನಾವು ಮತ ಚಲಾಯಿಸಿ ಮಧ್ಯ ಪ್ರಾಚ್ಯದಲ್ಲಿನ ಒಂದು ದೇಶದ ಬೆಂಬಲವನ್ನು ಕಳೆದು ಕೊಂಡೆವು.

ಕೇಂದ್ರ ಸರಕಾರದಲ್ಲಿ ಕೆಲಸ ಮಾಡದ ಅಥವಾ ಮಾಡಲು ಬಾರದ ಒಂದು ಇಲಾಖೆ ಇದ್ದರೆ ಅದೇ ವಿದೇಶಾಂಗ ಇಲಾಖೆ. ವಿದೇಶಾಂಗ ಇಲಾಖೆಯಲ್ಲಿ ಕೆಲಸ ಎಂದರೆ ಗರಿ ಗರಿಯಾದ ಸೂಟು, ಅಥವಾ ರೇಶಿಮೆ ಸೀರೆ ಉಟ್ಟು ದೇಶ ಸುತ್ತುವುದು ಎನ್ನುವ ತಪ್ಪು ಕಲ್ಪನೆ ಮನೆ ಮಾಡಿದೆ. ನೆಹರೂ ಕಾಲಾದ outdated ರಾಜನೀತಿಯ ನಿಯಮಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎನ್ನುವ ಭಾವನೆ ಬೇರೆ. ನಾವು ಯಾರ ಪರವೂ ಅಲ್ಲ, ಎಲ್ಲರ ಸವಾರಿ ನಮ್ಮ ಮೇಲೆ ನಡೆಯಲಿ ಎನ್ನುವ ನಿರ್ಲಿಪ್ತ ನೀತಿಯ ಮೇಲೆ ವಿಪರೀತ ಅವಲಂಬನೆ. ಆ ನೀತಿಗೆ ಒಂದೇ ಒಂದು ಬದಲಾವಣೆಯಂತೂ ಕಾಣಲು ಸಿಕ್ಕಿದೆ. ಅದೇ ಅಮೇರಿಕಾ ಪರ ನೀತಿ. ಹಿಂದೆ ರಷ್ಯಾ ಪರ, ಈಗ ಅಮೇರಿಕಾ ಪರ. ನಮಗೇಕೆ ಸ್ವಂತಿಕೆ ಇಲ್ಲ ಅಥವಾ ಇರಕೂಡದು? ವಿನಾಕಾರಣ ಕಾರ್ಗಿಲ್ ಅನ್ನು ಆಕ್ರಮಿಸಿ ನಮ್ಮ ಸಾವಿರಾರು ಸೈನಿಕರ ಸಾವಿಗೆ ಕಾರಣವಾದ ಪಾಕಿಸ್ತಾನವನ್ನು ಸದೆ ಬಡಿಯುವ ಸುಂದರ, ಬಹುಶಃ ಇನ್ನೆಂದೂ ಬರದ ಅವಕಾಶವನ್ನು ನಾವು ಕಳೆದು ಕೊಂಡೆವು. ಇದಕ್ಕೆ ಕಾರಣ ನಮಗೆ ಅಮೇರಿಕೆಯಿಂದ ಬಂದ ಮನವಿ. ಅವರಿಗೆ ಬೇಕಾದಾಗ ಮನವಿ, ಅಥವಾ ಬೆದರಿಕೆ. ಈ ಎರಡರಲ್ಲಿ ಒಂದನ್ನು ಕೊಟ್ಟು ಅಮೇರಿಕಾ ತನ್ನ ಕೆಲಸವನ್ನೂ ಸಾಧಿಸಿ ಕೊಳ್ಳುತ್ತದೆ.

೨೦೦೧ ಸೆಪ್ಟೆಂಬರ್ ತಿಂಗಳಿನಲ್ಲಿ ಅಮೆರಿಕೆಯ ಮೇಲೆ ನಡೆದ ಧಾಳಿಗೆ ತತ್ತರಿಸಿ ಪ್ರಪಂಚದ ಎಲ್ಲ ದೇಶಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿತು ಅಮೇರಿಕಾ. ಭಯೋತ್ಪಾದಕರು, ಅದಕ್ಕೆ ಧನ ಸಹಾಯ ನೀಡುವವರು ಯಾರದೇ ನೆಲದ ಮೇಲೆ ಇದ್ದರೋ ಅಮೆರಿಕೆಯ ಸುಪರ್ದಿಗೆ ಒಪ್ಪಿಸತಕ್ಕದ್ದು ಎನ್ನುವುದು ಮುಚ್ಚಳಿಕೆ. ವಿಧೇಯರಾಗಿ ಎಲ್ಲಾ ದೇಶಗಳೂ ತಲೆ ಬಾಗಿದವು. ನಮ್ಮ ದೇಶದ ಗಡಿ ನುಗ್ಗಿ ಒಂದು ನಗರವನ್ನು ತನ್ನ ಹಿಂಸೆಯಿಂದ ತತ್ತರಿಸುವಂತೆ ಮಾಡಿದ ಪಾಕ ಬಗ್ಗೆ ಮಾತ್ರ ಬೇರೆಯೇ ತೆರನಾದ ನಿಲುವು. ಉಗ್ರವಾಗಿ ಪ್ರತಿಭಟಿಸಿದಾಗ ಅಲ್ಲಿಂದ ಧಾವಿಸಿ ಬಂದ ವಿದೇಶಾಂಗ ಕಾರ್ಯದರ್ಶಿ ಕ್ಲಿಂಟನ್ ಒಂದ್ರೆಅದು ಮೊಂಬತ್ತಿ ಗಳನ್ನು ಹಚ್ಚಿ, ಎರಡು ನಿಮಿಷ ಮೌನ ಆಚರಿಸಿ ಸಮಾಧಾನ ಮಾಡಿ ಹೋದರು. ಮುಂಬೈ ಮೇಲಿನ ಆಕ್ರಮಣದ ವೇಳೆಯೂ ಭಾರತಕ್ಕೆ ಒಂದು ಸುವರ್ಣಾವಕಾಶ ಇತ್ತು ಪಾಕಿಗೆ ಒಂದು “ಝಟ್ಕಾ” ನೀಡಲು. ಅಲ್ಲೂ ಬಿಳಿ ನಗೆ ನಮ್ಮ priority ಮರೆಯುವಂತೆ ಮಾಡಿತು. ಬಿಳಿ ನಗುವಿನ ಮಾಯೆ ಅಂಥದ್ದು.     

ನಮ್ಮ ರಕ್ಷಣಾ ಸಚಿವ (ಜಾರ್ಜ್ ಫೆರ್ನಾಂಡಿಸ್) ರನ್ನು ಬೆತ್ತಲೆ ಮಾಡಿ ಅಮೆರಿಕೆಯ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ ಅದು ದೊಡ್ಡ ವಿಷಯವಲ್ಲ ನಂಗೆ. ಮೆಚ್ಚುಗೆ, ಅಬ್ಬಾ, ಎಂಥ ಭದ್ರತಾ ವ್ಯವಸ್ಥೆ ಅವರದು. ನಮ್ಮ ರಾಷ್ಟ್ರಪತಿ ಕಲಾಂ ರನ್ನು ವಿಮಾನ ನಿಲ್ದಾಣ ದಲ್ಲಿ ಅನುಚಿತವಾಗಿ ವರ್ತಿಸಿದಾಗಲೂ ನಿರ್ಲಿಪ್ತತೆ. ನಮ್ಮ ವಿದ್ಯಾರ್ಥಿಗಳನ್ನು ಅಲ್ಲಿನ ವಿದ್ಯಾಲಯವೊಂದು ಮೋಸ ಮಾಡಿ ನಂತರ ವಿದ್ಯಾರ್ಥಿಗಳು ಓಡಿ ಹೋಗದಂತೆ electronic tag ಅವರ ಕಾಲಿಗೆ ಕಟ್ಟಿ ಅವರ ಮೇಲೆ ನಿರಂತರ ನಿಗಾ ಇಟ್ಟಾಗಲೂ ನಮಗೆ ಅಮೆರಿಕೆಯ ನಡವಳಿಕೆ ಅಸಹನೀಯವಾಗಿ ತೋರುವುದಿಲ್ಲ. ಇನ್ನು ನಮಗೆ ತಿಳಿಯದ ಇನ್ಯಾವ್ಯಾವ ರೀತಿಯಲ್ಲಿ ನಮ್ಮ ಮೇಲೆ ಸವಾರಿ ಮಾಡುತ್ತಿದೆಯೋ ದೇವರೇ ಬಲ್ಲ. ನಮ್ಮ ಸರಕಾರ ಗಳನ್ನು ನಡೆಸಲು ಮಂತ್ರಿಗಳು, ಕಾರ್ಯದರ್ಶಿಗಳು ಎಲ್ಲಾ ಅರವತ್ತು, ಎಪ್ಪತ್ತು ವಯಸ್ಸು ದಾಟಲೇ ಬೇಕು. ಒಂದೆರಡು ಅಪವಾದಗಳನ್ನು ಬಿಟ್ಟರೆ ವಯೋವೃದ್ಧರ ಕಾರುಬಾರು. ಅವರಿಗೆ ರೋಷ ಎಲ್ಲಿಂದ ತಾನೇ ಬರಬೇಕು.   

ಈಗಿನ ವಿಶ್ವ bi-polar ಆಗಬೇಕಿಲ್ಲ. ಪ್ರಪಂಚದ ತುಂಬಾ ದೊಡ್ಡದು. ಹಳೇ ಕಾಲದ ರೀತಿಯ ರಾಜಕಾರಣವನ್ನು ಅಲ್ಲ ನಾವು ಕಾಣುತ್ತಿರುವುದು. ಪಕ್ಕದ ಚೀನಾ ಅತ್ಯಾಧುನಿಕ ಆಯುಧಗಳನ್ನು ಶೇಖರಿಸುತ್ತಿದೆ ಎಂದು ನಮ್ಮ ಗೃಹ ಮಂತ್ರಿ ಕಳವಳ ವ್ಯಕ್ತ ಪಡಿಸಿದರು. ಅವರ ಮನೆಯೊಳಗೇ ಕೂತು ಅವರೇನಾದರೂ ಮಾಡಿಕೊಳ್ಳಲಿ. ನಮಗೇಕೆ ಅವರ ಉಸಾಬರಿ? 3G ಸ್ಕ್ಯಾಮು ಮತ್ತು ಸ್ವಿಸ್ ಮತ್ತು ಇತರೆ ಬ್ಯಾಂಕುಗಳಲ್ಲಿ ನಮ್ಮ ಜನ ಹುಗಿದಿಟ್ಟಿರುವ ಸಂಪತ್ತನ್ನು ಉಪಯೋಗಿಸಿ ನಮ್ಮ ಸೈನ್ಯವನ್ನೂ ಬಲ ಗೊಳಿಸಲಿ. ಭಾರತದ ನೇತೃತ್ವದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಧ್ರುವೀಕರಣ ನಡೆಯಲಿ. ನಮ್ಮೊಂದಿಗೆ ಹೆಜ್ಜೆ ಹಾಕಲು ಲ್ಯಾಟಿನ್ ಅಮೆರಿಕೆಯಲ್ಲೂ, ಮಧ್ಯ ಪ್ರಾಚ್ಯದೇಶ ಗಳಲ್ಲೂ, ಆಫ್ಫ್ರಿಕಾ ಖಂಡದಲ್ಲೂ ದೇಶಗಳಿವೆ.

‘ವಿಕಿಲೀಕ್’ ಅವಾಂತರ

ವಿಕಿಲೀಕ್ ಈಗ ವಿಶ್ವ ಸುದ್ದಿಯಲ್ಲಿ. ವಿಶ್ವದ ಸರಕಾರಗಳ ಮಧ್ಯೆ, ಧುರೀಣರ ಮಧ್ಯೆ ನಡೆದ ಎರಡು ಲಕ್ಷದ ಐವತ್ತು ಸಾವಿರಕ್ಕೂ ಹೆಚ್ಚು ಕೇಬಲ್ ಗಳನ್ನು ತನ್ನ ವೆಬ್ ತಾಣದಲ್ಲಿ ಪ್ರಕಟಿಸಿ ಅಂತಾರಾಷ್ಟ್ರೀಯ ರಾಜಕಾರಣ ಎಂದರೆ ಗರಿ ಗರಿ ಕಪ್ಪು ಸೂಟು, ಮುಗುಳ್ನಗುವಿನೊಂದಿಗೆ ಹಸ್ತಲಾಘವ, ನಂತರ ಮೃಷ್ಟಾನ್ನ ಭೋಜನ ಎಂದು ತಿಳಿದಿದ್ದ ನಮಗೆ ಹೊಸತೊಂದು ವಿಶ್ವದ ಪರಿಚಯ ಮಾಡಿಕೊಟ್ಟಿತು ವಿಕಿಲೀಕ್. ‘ವಿಕಿಪೀಡಿಯ’ ಗೊತ್ತು, ಇದೇನೀ ‘ವಿಕಿಲೀಕ್’ ಎಂದಿರಾ? ವಿಕಿಪೀಡಿಯ ನಮಗೆ ತಿಳಿಯಬೇಕಾದ ವಿಷಯಗಳನ್ನು ಸರಾಗವಾಗಿ, ಕ್ಷಣ ಮಾತ್ರದಲ್ಲಿ ತಿಳಿಸಿಕೊಡುವ ತಾಣವಾದರೆ, ವಿಕಿಲೀಕ್ ಮಾತ್ರ ಸ್ವಲ್ಪ ಸರಿದು ನಿಂತು ನಾವೆಂದಿಗೂ ‘ಕೇಳಬಾರದ, ಆಡಬಾರದ, ನೋಡಬಾರದ’, ವಿಷಯಗಳನ್ನು ನಮಗೆ ತಲುಪಿಸಿ ಮಗುಮ್ಮಾಗಿ ಇದ್ದುಬಿಡುವ whistle blower. ಸ್ವಲ್ಪ ಮಟ್ಟಿಗೆ ನಮ್ಮ ಅಚ್ಚು ಮೆಚ್ಚಿನ ‘ತೆಹೆಲ್ಕಾ’ ರೀತಿಯದು. ಈ ವೆಬ್ ತಾಣದ ಸಾರಥಿ ಆಸ್ಟ್ರೇಲಿಯಾದ 39 ರ ಪ್ರಾಯದ ಜೂಲಿಯಾನ್ ಅಸಾಂಜ್. ಈಗ ಈತ ಕಂಬಿ ಎಣಿಸಲು ಅಥವಾ ತನ್ನ ತಲೆ ಕಳೆದುಕೊಳ್ಳುವ ನಿರೀಕ್ಷೆಯಲ್ಲಿ ಲಂಡನ್ನಿನ ಮೂಲೆಯೊಂದರಲ್ಲಿ ದಿನ ಕಳೆಯುತ್ತಿದ್ದಾನೆ.

ಅಭಿವ್ಯಕ್ತಿ ಸ್ವಾತಂತ್ರ್ಯ. ತಮ್ಮ ತಮ್ಮ ಹಿತಾಸಕ್ತಿಗಳಿಗೆ ಧಕ್ಕೆ ಬಂದಾಗ ತಮ್ಮದೇ ಆದ ಧೋರಣೆ. ಆ ಧೋರಣೆ ಹಿಂಸಾರೂಪ ತಾಳಿದರೂ ಯಾರಿಗೂ ಅದರ ಪರಿವೆ ಇಲ್ಲ. ಸೂಟು ಬೂಟು, ಬಿಳಿಚರ್ಮ ಹೊತ್ತವರು ಏನೇ ಹೇಳಿದರೂ ಎಲ್ಲಾ ಓಕೆ. ಗಡ್ಡ ಮಾತ್ರ ಇರಬಾರದು ಈ ರೀತಿಯ ಮಾತನ್ನಾಡಲು. ಆಗ ಪದಪ್ರಯೋಗದ ಸಮೀಕರಣ ಬದಲಾಗಿ ಬಿಡುತ್ತದೆ. ಕೆನಡಾದ ಪ್ರಧಾನಿಯ ಮಾಜಿ ಸಲಹೆಗಾರ stephen ‘Harper’ ನ ಪ್ರಕಾರ ವಿಕಿ ಲೀಕ ನ ಅಸಾಂಜ್ ನನ್ನು ಕೊಲ್ಲಬೇಕು. ನೋಡಿ ಎಂಥ ಅಸಂಬದ್ಧ, harping ಈತನದು. ಹೆಸರಿಗೆ ತಕ್ಕಂತೆ ನಡತೆ. ಅಭಿವ್ಯಕ್ತಿ ಸ್ವಾತಂತ್ರ್ಯ ತಂದು ಕೊಡುವ ಕಚಗುಳಿ ಎಂಥದ್ದು ಎಂದು ತಡವಾಗಿ ತಿಳಿಯಿತು ಅಮೆರಿಕೆಗೆ ಮತ್ತು ಅದರ ಹಿಂಬಾಲಕರಿಗೆ.

ರಾಜನಿಂದ ಹಿಡಿದು ರಾಜತಾಂತ್ರಿಕನವರೆಗೆ ಯಾರು ಏನು ಹೇಳಿದರು ಎಂದು ಸವಿಸ್ತಾರವಾಗಿ ಪ್ರಕಟಿಸಿದ ವಿಕಿಲೀಕ್ ಅಂತಾರಾಷ್ಟ್ರೀಯ ರಾಜಕಾರಣ ಯಾವ ರೀತಿಯ ‘ಡಬಲ್ ಗೇಂ’ ಎಂದು ನಮಗೆ ಮನವರಿಕೆ ಮಾಡಿಕೊಡುತ್ತಿದೆ. ನಮ್ಮ ದೇಶಕ್ಕೆ ಬಂದು ನಮ್ಮೆಲ್ಲರನ್ನೂ ಮರುಳು ಮಾಡಿ, ನಮಗೆ ಬಾಲಿವುಡ್ ಮೇಲೆ ಇರುವ ವ್ಯಾಮೋಹಕ್ಕೆ ತಕ್ಕಂತೆ ಒಂದಿಷ್ಟು ಡ್ಯಾನ್ಸ್ ಮಾಡಿ ಕೊನೆಗೆ ತಮ್ಮ ಊರು ತಲುಪಿದ ನಂತರ ಬೇರೆಯದೇ ಆದ ಸನ್ನೆ ಕಳಿಸುವುದು. ವಿಶ್ವಸಂಸ್ಥೆಯಲ್ಲಿ ಖಾಯಂ ಸದಸ್ಯತ್ವಕ್ಕಾಗಿರುವ ನಮ್ಮ ಆಸೆಯನ್ನೂ, ಅದಕ್ಕಾಗಿ ನಾವು ಹೆಣಗುತ್ತಿರುವುದನ್ನು ಅರಿತ ಅಮೇರಿಕಾದ ಅಧ್ಯಕ್ಷ ನಮ್ಮಲ್ಲಿಗೆ ಬಂದು ಭಾರತ ಈ ಸ್ಥಾನಕ್ಕೆ ಅತ್ಯಂತ ಅರ್ಹ ರಾಷ್ಟ್ರ, ನಮ್ಮ ಬೆಂಬಲ ಅದಕ್ಕಿದೆ ಎಂದು ನಮ್ಮನ್ನು ಪುಳಕಿತರಾಗಿಸಿ ಹೋದರು. ಈ ಮಾತು ಕೇಳಿ ನಮಗೆ ಆನಂದದ ಮಂಪರು. ಅತ್ತ ಅಮೆರಿಕೆಯ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರ ಅಭಿಪ್ರಾಯ ಬೇರೆಯೇ. ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವಕ್ಕೆ ಭಾರತ “ಸ್ವಯಂ ನೇಮಿತ” ಆಕಾಂಕ್ಷಿ ಎಂದು ಬಿರುದು ನೀಡಿದರು. “self appointed frontrunners” ಅಂತೆ. ಬೇಸರಿಸಬೇಡಿ, ಈ ಸ್ವಯಂ ನೇಮಿತ ಕ್ಲಬ್ಬಿನಲ್ಲಿ ಜಪಾನ್, ಬ್ರೆಜಿಲ್ ಮತ್ತು ಜರ್ಮನಿ ಸಹ ಸೇರಿವೆ. ಆಹ್, ಈಗ ಸ್ವಲ್ಪ ಸಮಾಧಾನ ನೋಡಿ. ನಮ್ಮೊಂದಿಗೆ ಇತರರನ್ನೂ ಸೇರಿಸಿ ಅಪಹಾಸ್ಯ ಮಾಡಿದರೆ ಭಾರ ಸಹಜವಾಗಿಯೇ ಸ್ವಲ್ಪ ಕಡಿಮೆ ಆಗುತ್ತದೆ. ಈ ಭಾವನೆಯೇ ಇರಬೇಕು ನಮ್ಮ ಮಾಧ್ಯಮಗಳು ಇದನ್ನು ಒಂದು ‘slight’ ಎಂದು ಪರಿಗಣಿಸಲು ಸೋತಿದ್ದು. ನೀವು ಅನುಮತಿಸಿದರೆ ನನ್ನದೊಂದು ಸಂಶಯ. ಅಮೇರಿಕಾ ನಮ್ಮನ್ನು ಇನ್ಯಾವ ರೀತಿಯಲ್ಲಿ ನಡೆಸಿ ಕೊಂಡಾಗ ನಾವು ಎಚ್ಚೆತ್ತು ಕೊಂಡು ‘ thanks for everything, yank. bye bye’ ಎಂದು ವಿನಯದಿಂದ ಹೇಳೋದು? ಅಮೆರಿಕೆಯ ಸಹವಾಸ ಮಾಡಿದವರು ಉದ್ಧಾರವಾದ ಕುರಿತು ಕೈಲಾಸದಲ್ಲಿ ಮನೆ ಮಾಡಿರುವವನಿಗೆ ಬಹುಶಃ ಗೊತ್ತಿರಬಹುದು. ಬೇರಾರಿಗೂ ಗೊತ್ತಿರುವ ಬಗ್ಗೆ ವರದಿಯಿಲ್ಲ. ಸದ್ದಾಮ್ ಕಾಲಾವಧಿ ನಂತರದ ಇರಾಕಿನ ತೈಲ ಸಚಿವನಾಗಿದ್ದ ‘ಅಹಮದ್ ಶಲಾಬಿ’ ಹೇಳಿದ್ದು america betrays its friends. it sets them up and betrays them. I’d rather be america’s enemy. ನಿನ್ನ ಮೈತ್ರಿಗಿಂತ ನಿನ್ನ ಶತ್ರುತ್ವವೇ ಬಲು ಚೆಂದ ಎಂದು. ವಿಷಕನ್ಯೆಗೆ ಹೇಳಬಹುದಾದ ಸವಿ ಮಾತುಗಳು ಇವು, ಅಲ್ಲವೇ? ಅಮೆರಿಕೆಯ ಸಹಾಯದಿಂದ ಅಧಿಕಾರದ ಗದ್ದುಗೆಗೆ ಏರಿದ ವ್ಯಕ್ತಿಯೊಬ್ಬ ಈ ಮಾತನ್ನು ಹೇಳಬೇಕೆಂದರೆ ಅವನಿಗೆ ಎಂಥ ರಾಜೋಪಚಾರ ಸಿಕ್ಕಿರಬೇಕು?

ಈಗ ಈ ಬರಹದಲ್ಲಿ anti americanism ಧೋರಣೆಯನ್ನು ದಯಮಾಡಿ ಕಾಣಬೇಡಿ. ಅಮೆರಿಕೆಯವೇ ಆದ “Levis” ಜೀನ್ಸ್, ‘papa johns’ pizza, ಮತ್ತು ಕಡಿಮೆ ಸ್ಪೆಲ್ಲಿಂಗ್ ಇರುವ ‘ಅಮೇರಿಕನ್ ಇಂಗ್ಲಿಶ್’ ನನಗೆ ತುಂಬಾ ಇಷ್ಟ. ನನ್ನ ನಿಲುವು ಇಷ್ಟೇ. ನಮ್ಮ ರಾಜಕಾರಣ ಮತ್ತು ಅವರ ರಾಜಕಾರಣ ಸ್ವಲ್ಪ ‘ಡಿಫ್ಫ್ರೆಂಟು’. ಆದರೆ ನಮಗೆ ಈ ‘ಡಿಫ್ಫ್ರೆನ್ಸು’ ಅರಗಿಸಿಕೊಳ್ಳಲಾಗದಂಥ ‘depression’ ತಂದೊಡ್ಡುತ್ತದೆ. ಹಾಗಾಗಿ ಸಂಚಾರಿ ನಿಯಮದ ಥರ ‘ನಡುವೆ ಅಂತರವಿರಲಿ’ ರೀತಿಯ ಅಂತರ ಕಾಯ್ದು ಕೊಳ್ಳಲು ನನ್ನ ಹಂಬಲ. ಗುಮಾನಿ ಪಡಬೇಕಾದ ulterior motive ಇಲ್ಲ.

ಬನ್ನಿ ನಾನಿರುವ ಕೊಲ್ಲಿ ಪ್ರದೇಶಕ್ಕೆ. ಇಲ್ಲೊಂದು ಸ್ವಾರಸ್ಯ. ನೋಡಿ, ನಾನು ಕೊಲ್ಲಿ ಎಂದು ಟೈಪ್ ಮಾಡಿದಾಗ “ಕೊಳ್ಳಿ” ಅಂತ ತೋರಿಸಿತು ಗೂಗಲ್. ಒಂದು ರೀತಿಯ “ಕೊಳ್ಳಿ” ಎಂದೇ ಕರೆಯಬಹುದು ಈ ಪ್ರಾಂತ್ಯವನ್ನು. ಸೌದಿ ಅರೇಬಿಯಾದ ದೊರೆ ‘ಅಬ್ದುಲ್ಲಾ ಇಬ್ನ್ ಅಬ್ದುಲ್ ಅಜೀಜ್ ಅಲ್-ಸೌದ್’ ವಿಶ್ವದ ಮುಸ್ಲಿಮರು ಗೌರವಿಸುವ ವ್ಯಕ್ತಿತ್ವ. ಏಕೆಂದರೆ ಇಸ್ಲಾಮಿನ ಪವಿತ್ರ ನಗರಗಳಾದ ಮಕ್ಕಾ ಮತ್ತು ಮದೀನ ಇರುವುದು ಸೌದಿ ಅರೇಬಿಯಾದಲ್ಲಿ. ಇಲ್ಲಿನ ದೊರೆ ಹೆಮ್ಮೆಯಿಂದ ತನ್ನನ್ನು ತಾನು ಕರೆದುಕೊಳ್ಳುವುದು ಎರಡು ಪವಿತ್ರ ಕ್ಷೇತ್ರಗಳ ಸಂರಕ್ಷಕ ಎಂದು. ಸಾವಿರಾರು ಕೋಟಿ ಖರ್ಚು ಮಾಡಿ ಎರಡು ಪವಿತ್ರ ಕ್ಷೆತ್ರಗಳನ್ನು ಇನ್ನಷ್ಟು ವಿಸ್ತರಿಸಿದ ಖ್ಯಾತಿ ಈ ದೊರೆಗೆ. ಹಾಗಾಗಿ ವಿಶ್ವದ ಮುಸ್ಲಿಮರಿಗೆ ಇವರ ಮೇಲೆ ಆದರ, ಗೌರವ. ಹಾವಿನ ತಲೆ ಕಡಿಯುವಂತೆ ಕಡಿಯಬೇಕು ಎಂದು ಇರಾನಿನ ಕುರಿತು ಅಮೆರಿಕೆಗೆ ಶಿಫಾರಸು ಮಾಡಿದರು ದೊರೆ ಅಬ್ದುಲ್ಲಾ ಎಂದು ವಿಕಿಲೀಕ್ ಎಲ್ಲರನ್ನೂ ತಲ್ಲಣಗೊಳಿಸಿತು. ಒಬ್ಬ ಮುಸ್ಲಿಮ್ ರಾಷ್ಟ್ರದ ದೊರೆ ಮತ್ತೊಂದು ಸೋದರ ದೇಶದ ವಿರುದ್ಧ ಈ ರೀತಿ ಮಾತನಾಡಿದ್ದು ಅಚ್ಚರಿ ತರಿಸಿತು ಪಾಶ್ಚಾತ್ಯ ದೇಶಗಳಿಗೆ. ಇವರಿಬ್ಬರ ನಡುವಿನ ಸ್ನೇಹದ “ಆಳ” ಎಲ್ಲರಿಗೂ ಗೊತ್ತಿದ್ದರೂ ತಲೆ ಕಡಿಯಲು ಶಿಫಾರಸ್ಸು ಮಾಡುವ ಮಟ್ಟಕ್ಕೆ ಹೋಗುತ್ತದೆ ಎಂದು ಯಾರೂ ಎಣಿಸಿರಲಿಲ್ಲ. ಇರಾನ್ ಶಿಯಾ ಬಾಹುಳ್ಯದ ರಾಷ್ಟ್ರ ಮತ್ತು ಸೌದಿ, ಸುನ್ನಿ ರಾಷ್ಟ್ರ. ಚಾರಿತ್ರಿಕವಾಗಿ ಶಿಯಾ – ಸುನ್ನಿ ಪಂಗಡಗಳ ನಡುವಿನ ಜಟಾಪಟಿ ತುಂಬಾ ಹಳತು. ideological difference ಅಲ್ಲದಿದ್ದರೂ ವ್ಯಕ್ತಿ (ಪ್ರವಾದಿ ಮುಹಮ್ಮದ್ ಮತ್ತು ‘ಹಜರತ್ ಅಲಿ’ ವಿಷಯದಲ್ಲಿ) ನಿಷ್ಠೆಯಲ್ಲಿ ಸುನ್ನಿ ಮತ್ತು ಶಿಯಾ ಜನರಲ್ಲಿ ಒಡಕಿದೆ. ಸೌದಿ ದೊರೆಯ ಈ ಬೆಚ್ಚಿ ಬೀಳಿಸುವಂಥ ಮಾತನ್ನು ಕೇಳಿದ ಇರಾನ್ ಸೌದಿಯನ್ನು ಇನ್ನು ಯಾವ ರೀತಿ ನಡೆಸಿಕೊಳ್ಳಬಹುದು ಎಂದು ಕಾದು ನೋಡಬೇಕು.

ಈ ತೆರನಾದ ಸುದ್ದಿಗಳನ್ನು ಚಿಕ್ಕಾಸಿನ ಅಪೇಕ್ಷೆಯೂ ಇಲ್ಲದೆ ಬಟಾಬಯಲು ಮಾಡುತ್ತಿರುವ ವಿಕಿಲೀಕ್ ಮೇಲೆ ಅಮೇರಿಕ ಮುಂತಾದ ರಾಷ್ಟ್ರಗಳ ಕೆಂಗಣ್ಣು. ಇದ್ದದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದೆಯೋದು ಲೋಕ ರೂಢಿಯೇ ತಾನೇ? ಅಮೇರಿಕಾ ಏಕೆ ಅದಕ್ಕೆ ಹೊರತಾಗಬೇಕು? ವಿಕಿಲೀಕ್ ವೆಬ್ ತಾಣ ಬೇರಾವುದಾದರೂ ಒಂದು ದೇಶ ಅಮೆರಿಕೆಯ ವಿರುದ್ಧ ಹೇಳಿದ್ದನ್ನು ಲೀಕ್ ಮಾಡಿದ್ದಿದ್ದರೆ ಅಮೇರಿಕ ಕುಣಿದು ಕುಪ್ಪಳಿಸುತ್ತಿತ್ತು. ಆದರೆ ‘ವಿಕಿಲೀಕ್’ ನ ಕೊಡಲಿ ತನ್ನ ಬುಡದ ಕಡೆಗೆ ಪ್ರಯಾಣ ಬೆಳೆಸಿದಾಗ ಮಾತ್ರ ಅಮೇರಿಕಾ ಹೌಹಾರಿತು. ಹೌಹಾರದೆ ಏನು? ಬೇಲಿಯೂ ತಾನೇ, ಮೇಯುವವನೂ ತಾನೇ. ಇದು ಅಮೆರಿಕೆಯ ವಿದೇಶಾಂಗ ನೀತಿ. ಹಾಗಾಗಿ ವಿಕಿಲೀಕ್ ಸ್ಥಾಪಕ ‘ಅಸಾಂಜ್’ ನನ್ನು ದೇಶದ್ರೋಹಿ ಎಂದು ಹಣೆ ಪಟ್ಟಿ ಲಗತ್ತಿಸಿದ್ದಲ್ಲದೆ ಅವನನ್ನು ವಧಿಸುವ ತನಕ ಅಮೆರಿಕೆಯ ಆಕ್ರೋಶ ಆವರಿಸಿತು. ಆದರೆ ಇದಕ್ಕೆಲ್ಲಾ ಕ್ಯಾರೇ ಅನ್ನದೆ ಅಸಾಂಜ್ ತನ್ನ ಕೆಲಸ ಇನ್ನೂ ಮುಂದುವರಿಸುವುದಾಗಿ ಅವನ ಬೆಂಬಲಿಗರಿಗೆ ಭರವಸೆ ನೀಡಿದ. ಈಗ ಆತನ ಕಣ್ಣು ಅಮೆರಿಕೆಯ ಅತಿ ದೊಡ್ಡ ಬ್ಯಾಂಕುಗಳ ಅವ್ಯವಹಾರ ಮತ್ತು ಕಾರ್ಯವೈಖರಿಯ ಕಡೆ. ಅಸಾಂಜ್ ನ ಮಾತು ಸಿಡಿಲಿನಂತೆ ಎರಗಿತು ಬ್ಯಾಂಕಿಂಗ್ ವಲಯಗಳ ಮೇಲೆ. ಇವನ್ನೆಲ್ಲಾ ಕೇಳುತ್ತಿರುವ, ನೋಡುತ್ತಿರುವ ನಮಗೆ ಅಮೇರಿಕಾ ಪ್ರಪಂಚದ ಎಲ್ಲಾ ಪಾಪಗಳ, ಕೃತ್ರಿಮಗಳ ಉಗಮಸ್ಥಾನವೋ ಎಂದು ತೋರುವುದು ಅಸಹಜವೇನಲ್ಲ. ಹಾಲಿವುಡ್ ಅಂದ್ರೆ ಒಂದಿಷ್ಟು ಸೆಕ್ಸ್ ಇರಲೇಬೇಕು, ಏನಂತೀರಾ? ಹಾಗೆಯೇ ಅಂತಾರಾಷ್ಟ್ರೀಯ ರಾಜಕಾರಣದಲ್ಲೂ ಒಂದಿಷ್ಟು ಶೃಂಗಾರ ನುಸುಳುವುದಿದೆ ಎಂದು ವಿಕಿಲೀಕ್ ಬಯಲು ಮಾಡಿತು. ಲಿಬ್ಯಾ ದೇಶದ charismatic ಅಧ್ಯಕ್ಷ ‘ಮುಅಮ್ಮರ್ ಗದ್ದಾಫಿ’ ಜೊತೆ ಯಾವಾಗಲೂ ಮೋಹಕ ಅಂಗಸೌಷ್ಟವ ಹೊಂದಿದ ಯುಕ್ರೇನ್ ದೇಶದ ನರ್ಸ್ ಇರುತ್ತಾಳೆ ಎಂದು ಒಬ್ಬ ರಾಜತಾಂತ್ರಿಕ ಅಸೂಯೆಯಿಂದ ಜೊಳ್ಳು ಸುರಿಸಿದ. ಅಂದ್ರೆ ಬರೀ ಬೋರ್ ಹೊಡೆಸುವ global warming ರಾಜಕಾರಣ ಮಾತ್ರ ಅಲ್ಲ ಮಹೋದಯರ ಆಸಕ್ತಿ ಎಂದು ಇದರಿಂದ ಸ್ಪಷ್ಟವಾಯಿತು. ಕಂಪ್ಯೂಟರ್ ಬದಿಗೆ ಸರಿಸಿ ಹೀಗೇ ಮೋಜಿಗಾಗಿ ಸ್ವಲ್ಪ ಊಹಿಸಿ. ವಿಕಿಲೀಕ್ ತೆರನಾದ ಒಂದು ವ್ಯವಸ್ಥೆ ನಮ್ಮ ದೇಶದಲ್ಲಿಯೂ ಇದ್ದಿದ್ದರೆ 2G, 3G ಕಾಂಡಗಳು, ಆದರ್ಶ್ ಸೊಸೈಟಿ, ಸೈನಿಕರ ಶವ ಪೆಟ್ಟಿಗೆ ಗಳಂಥ ಹಗರಣ ಗಳು, ನಾವು ಕಂಡ ಬಗೆ ಬಗೆಯ ವರ್ಣರಂಜಿತ ಧಂಧೆಗಳು, ಇವೆಲ್ಲಾ ಪಿಕ್ನಿಕ್ ಥರ ಕಾಣುತ್ತಿದ್ದವು. ಈ ಮೇಲೆ ಹೇಳಿದ ಹಗರಣಗಳನ್ನೂ ಮೀರಿಸುವ ದೈತ್ಯಾಕಾರದ ತಿಮಿಂಗಿಲಗಳು ವಿಕಿಲೀಕ್ ಬಲೆಗೆ ಸಿಕ್ಕು ವಿಲವಿಲ ಎನ್ನುತ್ತಿದ್ದವೋ ಏನೋ.

ಜೂಲಿಯನ್ ಅಸಾಂಜ್ ನ ವಿಕಿಲೀಕ್ ಜ್ವಾಲಾಮುಖಿಯಂತೆ ಸ್ಫೋಟಿಸಿದೆ. ಅದರ ಸುಡುವ ಲಾವಾರಸ ಜಗತ್ತಿನ ನಾಲ್ಕೂ ಕಡೆ ಹರಿಯುತ್ತಿದೆ. ಹರಿಯುವ ನಾಲಗೆಗಳಿಗೆ ಇನ್ನಷ್ಟು ಫಲವತ್ತನ್ನು ಒದಗಿಸುತ್ತಿದೆ. ಇದಕ್ಕೆಲ್ಲಾ ಕಾರಣೀಭೂತನಾದ ಜೂಲಿಯಾನ್ ಅಸಾಂಜ್ ನನ್ನು ಹೇಗೆ ಗತಿ ಕಾಣಿಸಬೇಕೆಂದು ಬಲಿಷ್ಠ ರಾಷ್ಟ್ರಗಳು ಲೆಕ್ಕ ಹಾಕುತ್ತಿವೆ. ಅಮೇರಿಕಾ ವಿರೋಧಿಯಾದ ಅಸಾಂಜ್ ಒಬ್ಬ ಸಾಮಾನ್ಯ ಆಸ್ಟ್ರೇಲಿಯನ್ ಪ್ರಜೆ. ಆತನದು ಠಿಕಾಣಿ ಯಿಲ್ಲದ ವಾಸ. ಒಂದೇ ಸ್ಥಳದಲ್ಲಿ ಎರಡು ರಾತ್ರಿಗಳನ್ನು ಕಳೆಯದ ಅಲೆಮಾರಿ. ವಿಶ್ವದ ಮೇಲಿನ ಅಮೆರಿಕೆಯ ಕಪಿ ಮುಷ್ಠಿ ಅವನಿಗೆ ಇಷ್ಟವಿಲ್ಲ. ಪ್ರಪಂಚದಲ್ಲಿ ನಡೆಯುವ ಅನ್ಯಾಯಗಳು ಜನರಿಗೆ ತಲುಪಿದರೆ ಪರಿಸ್ಥಿತಿ ಸುಧಾರಿಸಬಹುದು ಎಂದು ನಂಬಿರುವ ಈತ, ಮಾಡುತ್ತಿರುವುದು ಒಳ್ಳೆಯ ಕೆಲಸವೋ ಅಥವಾ ಕೆಲಸವಿಲ್ಲದ ಬಡಗಿಯ ಬೇಡದ ಉಸಾಬರಿಯೋ ಎಂದು ವಿಶ್ವವೇ ಹೇಳಬೇಕು. ಆದರೆ ಆತನ ತಾಯಿ ಮಾತ್ರ ಹೇಳುತ್ತಿರುವುದು “ನನಗೆ ನನ್ನ ಮಗನ ಪರಿಸ್ಥಿತಿಯ ಬಗ್ಗೆ ಆತಂಕವಾಗುತ್ತಿದೆ, ನಾನು ಅವನನ್ನು ಪ್ರೀತಿಸುತ್ತೇನೆ, ಅವನು ಎಷ್ಟಿದ್ದರೂ ನನ್ನ ಮಗನೇ. ನನ್ನ ಮತ್ತು ನನ್ನ ಮಗನ ಬಗ್ಗೆ ಅವರು ಹೇಳುತ್ತಿರುವುದೆಲ್ಲಾ ನಿಜವಲ್ಲ’ ಎಂದು ಆಕೆ ತನ್ನ ಮಗನ ಸುರಕ್ಷೆಗಾಗಿ ಹಂಬಲಿಸುತ್ತಾಳೆ, ಎಲ್ಲಾ ಹೆತ್ತಬ್ಬೆಯರು ಚಡಪಡಿಸುವ ರೀತಿಯಲ್ಲಿ.

ಗೊತ್ತಿಲ್ಲದವರಿಗೆ: ‘ವಿಕಿ’ ಎಂದರೆ, ‘ಹವಾಯಿ’ ಭಾಷೆಯಲ್ಲಿ ವೇಗ, ಕ್ಷಿಪ್ರ ‘fast’ ಅಂತ. ಮತ್ತು ಲೀಕ್ ಎಂದರೆ ಅದೇ ಆರ್ಡಿನರಿ ಲೀಕು, ನಮ್ಮಗಳ ಅಡುಗೆ ಮನೆಯಲ್ಲಿನ ‘ನಲ್ಲಿ’ ತೊಟ ತೊಟ ಎಂದು ಹನಿಯುದುರಿಸುತ್ತಾ ನಮ್ಮ ತಾಳ್ಮೆಯನ್ನು ಪರೀಕ್ಷಿಸುವ ಸೋರಿಕೆ. ಈ ಕ್ಷಿಪ್ರ ಮತ್ತು ಸೋರಿಕೆ ಇವೆರಡೂ ಸೇರಿಕೊಂಡಾಗ ಆಗುವುದು ants in the pant ಪರಿಸ್ಥಿತಿ. ಮೇಲೆ ವಿವರಿಸಿದ ಪರಿಸ್ಥಿತಿ.

pic courtesy: independent, UK

ಮರೆತು ಹೋದ ಮಾತೃ ಭಾಷೆ

ಸೋನಿಯಾ ಅಮೇರಿಕೆಯಿಂದ ವಾಪಸಾಗಿ ಲೋಕಸಭೆಯ ಕಲಾಪಗಳಲ್ಲಿ ಮತ್ತು ತಮ್ಮ ಪಕ್ಷದ ಬೈಠಕ್ ವೊಂದರಲ್ಲಿ ಭಾಗಿಯಾದರು ಎಂದು ವರದಿ. ತಮ್ಮ ತಾಯಿಯವರ ಅನಾರೋಗ್ಯದ ಕಾರಣ ಅವರ ಶುಶ್ರೂಷೆಗೆಂದು ಅಮೆರಿಕೆಗೆ ಹೋಗಿದ್ದರು ಸೋನಿಯಾ ಗಾಂಧೀ.   

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದಾಗ ಇಟಲಿ ದೇಶದ ಟೀವೀ ಚಾನಲ್ ನ ತಂಡ ಅವರ ಸಂದರ್ಶನಕ್ಕೆಂದು ದಿಲ್ಲಿಗೆ ಬಂದಿತ್ತು. ಸಂದರ್ಶಕ ಇಟಾಲಿಯನ್ ಭಾಷೆಯಲ್ಲಿ ಪ್ರಶ್ನೆ ಕೇಳಲು ಆರಂಭಿಸಿದಾಗ ಸೋನಿಯಾ ನನಗೆ ಇಟಾಲಿಯನ್ ಭಾಷೆ ಬರುವುದಿಲ್ಲ, ದಶಕಗಳ ಹಿಂದೆಯೇ ಬಳಸುವುದನ್ನು ನಿಲ್ಲಿಸಿದ್ದರಿಂದ ಇಟಾಲಿಯನ್ ಭಾಷೆಯಲ್ಲಿ ಮಾತನಾಡಲಾಗದು ಎಂದು ಹೇಳಿದ್ದರು. ಯಾರೇ ಆದರೂ, ಅದೆಷ್ಟೇ ದಶಕಗಳನ್ನು ತಮ್ಮ ಮಾತೃ ಭಾಷೆಯ ನಂಟಿನಿಂದ ದೂರ ಇದ್ದರೂ ತಮ್ಮ ಸ್ವಂತ ಭಾಷೆಯನ್ನೂ ಮರೆಯುವ ಪ್ರಶ್ನೆಯೇ ಇರುವುದಿಲ್ಲ. ಆದರೆ ತಮ್ಮನ್ನು ವಿದೇಶೀ ಮಹಿಳೆ ಎಂದು ಜರೆಯುತ್ತಿದ್ದ ವಿರೋಧ ಪಕ್ಷಗಳಿಗೆ ಹೆದರಿ ತಮ್ಮ ಮಾತೃ ಭಾಷೆಯನ್ನು ನಿರಾಕರಿಸುವಂತೆ ಅವರನ್ನು ಪ್ರೇರೇಪಿಸಿತು. ಹಾಗಾದರೆ ತಮ್ಮ ತಾಯಿಯ ಶುಶ್ರೂಷೆ ಗೆಂದು ಅಮೆರಿಕೆಗೆ ಹೋದ ಸೋನಿಯಾ ತಮ್ಮ ತಾಯಿಯೊಂದಿಗೆ ಯಾವ ಭಾಷೆಯಲ್ಲಿ ಮಾತನಾಡಿಸಿರಬೇಕು? ಏಕೆಂದರೆ ಬಹುತೇಕ ಇಟಾಲಿಯನ್ನರಿಗೆ ಆಂಗ್ಲ ಭಾಷೆ ಬರುವುದಿಲ್ಲ. ಆಂಗ್ಲ ಭಾಷೆಯೇ ಶ್ರೇಷ್ಠ ಎಂದು ತಮ್ಮ ತಮ್ಮ ಮಾತೃ ನುಡಿಗಳನ್ನು ಕಡೆಗಣಿಸಿ ತಮ್ಮ ಮಕ್ಕಳಿಗೆ ಆಂಗ್ಲ ಭಾಷೆಯಲ್ಲಿ ಮಾತನಾಡಲು ಪ್ರೋತ್ಸಾಹಿಸುವ ಪಾಲಕರಿಗೆ ಗೊತ್ತಿದೆಯೇ ಸಂಪೂರ್ಣ ಯೂರೋಪಿನಲ್ಲಿ ಆಂಗ್ಲ ಭಾಷೆಯಲ್ಲಿ ಮಾತನ್ನಾಡುವ, ವ್ಯವಹರಿಸುವ ದೇಶ ಒಂದೇ ಒಂದು ಎಂಬುದು?      

ಒಬ್ಬ ಮಹಿಳೆ ಭಾರತೀಯ ಸಂಜಾತನನ್ನು ಪ್ರೀತಿಸಿ ಮದುವೆಯಾಗುತ್ತಾಳೆ, ಭಾರತೀಯ ಪೌರತ್ವ ಪಡೆದು ಇಲ್ಲಿನ ಸಂಸ್ಕೃತಿಗೆ ತಲೆಬಾಗಿ ಬದುಕನ್ನು ಸಾಗಿಸುತಾಳೆ. ಜನರ ಅಭೂತ ಪೂರ್ವ ಬೆಂಬಲದಿಂದ ಲಕ್ಷಾಂತರ ಮತಗಳಿಂದ ತನ್ನ ಪ್ರತಿಸ್ಪರ್ದಿಯನ್ನು  ಪರಾಭವ ಗೊಳಿಸಿದ್ದು ಮಾತ್ರವಲ್ಲದೆ ತನ್ನ ನಾಯಕತ್ವದಲ್ಲಿ ಪಕ್ಷವೊಂದನ್ನು ಅಧಿಕಾರದ ಗದ್ದುಗೆಗೂ ಏರಿಸುತ್ತಾಳೆ. ಈ ರೀತಿಯ ಜನಮನ್ನಣೆ ಇದ್ದರೂ ಆಕೆ ದೇಶದ ಅತ್ಯುನ್ನತ ಹುದ್ದೆಗೆ ಅನರ್ಹಳಾಗುತ್ತಾಳೆ. ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಕೂರಲು ಬಿಡದ ಜನರಿಗೆ ಬೆದರಿ ತನ್ನ ಮಾತೃ ಭಾಷೆಯಲ್ಲಿ ತನಗೆ ಮಾತನಾಡಲು ಬರುವುದಿಲ್ಲ ಎಂದು ಹೇಳಿಕೆಯನ್ನು ಕೊಡುತ್ತಾಳೆ. ಒಬ್ಬ ವ್ಯಕ್ತಿಗೆ ತನ್ನ ಮಾತೃ ಭಾಷೆಯಲ್ಲಿ ಮಾತನಾಡಲು ಹೆದರುವಂಥ ಪರಿಸ್ಥಿತಿ ಸೃಷ್ಟಿಸುವ ವ್ಯವಸ್ಥೆ ಮತ್ತು ಅಸಹನೆಯಿಂದ ನಾವು ವಿಶ್ವಕ್ಕೆ ನೀಡುತ್ತಿರುವ ಸಂದೇಶವಾದರೂ ಏನು?

ಬುರ್ಖಾ ನಿಷೇಧ

ಯೂರೋಪಿನಲ್ಲಿ ಈಗ ಬುರ್ಖಾ ನಿಷೇಧಿಸುವ ಕುರಿತ ಚರ್ಚೆ. ಇನ್ನು ಕೆಲವೇ ದಿನಗಳಲ್ಲಿ ಫ್ರಾನ್ಸ್ ಸಂಸತ್ತು ಬುರ್ಖಾವನ್ನು ನಿಷೇಧಿಸಲಿದೆ. ಎಂಥ ವೈಚಿತ್ರ್ಯ ಇದು. ಒಂದು ಕಡೆ ಮಹಿಳೆಯ ಜನ್ಮಸಿದ್ಧ ಹಕ್ಕುಗಳ ಬಗ್ಗೆ ದೊಡ್ಡ ದೊಡ್ಡ ಭಾಷಣಗಳು, ಚಟುವಟಿಕೆಗಳು ಜರಗುತ್ತಿದ್ದರೆ ಮತ್ತೊಂದು ಕಡೆ ತಾನು ಮಾನವಾಗಿ ತನ್ನ ಶರೀರವನ್ನು ಮುಚ್ಚಿಕೊಂಡು ಓಡಾಡುತ್ತೇನೆ ಎಂದು ಹೇಳುವ ಮಹಿಳೆಯರ ಮೇಲೆ ಸಮಾಜದ ದಿಗ್ಬಂಧನ, ಕಾನೂನು. ಫ್ರಾನ್ಸ್ ನ ಅಧ್ಯಕ್ಷ ಮಹಾಶಯನ ಲೈಂಗಿಕ ಚಟುವಟಿಕೆ ತಿಳಿದವರಿಗೆ ಅಲ್ಲಿನ ಸಂಸತ್ತಿನಲ್ಲಿ ಅವನಂಥ ಎಷ್ಟು ಸದಸ್ಯರು ತಮ್ಮ ಅಧ್ಯಕ್ಷನ ರೀತಿ ಹೆಣ್ಣನ್ನು ತಮ್ಮ ತೃಷೆಗಾಗಿ ಉಪಯೋಗಿಸಿಕೊಳ್ಳುತ್ತಿರಬಹುದು ಎಂದು ಯೋಚಿಸಿದರೆ ತಪ್ಪಿಲ್ಲ. ಇದೇ ನಡತೆಗೆಟ್ಟ ಗಂಡಸರು ಹೆಣ್ಣು ವಿವಸ್ತ್ರಳಾಗೋದನ್ನು ಬಯಸುತ್ತಾ ಮಾನವಾಗಿ ನಡೆಯಲಿಚ್ಚಿಸುವ ಮಹಿಳೆಯರ ಮೇಲೆ ಕಾನೂನಿನ ತೂಗುಗತ್ತಿಯನ್ನು ಇಳಿ ಬಿಡುತ್ತಾರೆ. ಇವರಿಗೆ ಮಹಿಳೆ ಮೈತುಂಬಾ ಹೊದ್ದು ಕೊಳ್ಳುವುದು ಗುಲಾಮಗಿರಿಯ ಸಂಕೇತ. ಶೋಷಣೆಯ ಹೆಗ್ಗುರುತು. ಹೆಣ್ಣು ಕನಿಷ್ಠ ಉಡುಗೆ ತೊಡುವುದು ultimate civilization.     

ಬೆತ್ತಲೆ, ಕನಿಷ್ಠ ಉಡುಗೆ ಇಷ್ಟ ಪಡುವ ವಿಶ್ವ. ದೊಡ್ಡ ಕೋಲಾಹಲವನ್ನೇ ಸೃಷ್ಟಿಸುತ್ತಿದೆ ಈ ಸುಮಾರು ಐದು ಮೀಟರು ಬಟ್ಟೆ. ಮೂರೂ ಬಿಟ್ಟು, ಕನಿಷ್ಠ ಉಡುಗೆ ತೊಟ್ಟು ತಮ್ಮ ಶರೀರ ದಾರಿಹೋಕರ ಕಣ್ಣುಗಳಿಗೆ ಎಂದು ಬಿಂಕದಿಂದ ನಡೆಯುವ ಉದಾರವಾದಿ ಮಹಿಳೆ ಮತ್ತು ಇಂಥ ಉಡುಗೆಗಳಲ್ಲಿ ಪರಸ್ತ್ರೀಯರನ್ನು ನೋಡಿ ನಾಲಗೆ ಚಪ್ಪರಿಸಿ ಸವಿಯುವ  ಪುರುಷರಿಗೆ ಈ ಬುರ್ಖಾ ಎನ್ನುವ ವಸ್ತ್ರ ಸಹ್ಯವಾದರೂ ಹೇಗಾದೀತು? ಸೌಂದರ್ಯ ಸ್ಪರ್ದೆಯ ಹೆಸರಿನಲ್ಲಿ ಹೆಣ್ಣನ್ನು ನಾನಾ ಬಗೆಯ  ಉಡುಗೆಗಳಲ್ಲಿ ಅತ್ತಿಂದಿತ್ತ ಓಡಾಡಿಸಿ ಕ್ಯಾಮೆರಾ ಕಣ್ಣುಗಳಿಂದ ಅವಳ ಉಬ್ಬು ತಗ್ಗುಗಳನ್ನು ವಿವಿಧ ಕೊನಗಳಲ್ಲಿ ಸೆರೆಹಿಡಿದು, ಅವಳ ಅಂಗ ಸೌಷ್ಟವದ ಅಳತೆ ತೆಗೆದು ತಾವು ಕಲ್ಪಿಸಿಕೊಂಡ ಮಾನ ದಂಡಕ್ಕೆ ಅವಳ ಅಳತೆಯಿದ್ದರೆ ಅವಳನ್ನು ವಿಶ್ವ ಸುಂದರಿ, ಮಿಸ್ ವರ್ಲ್ಡ್, ಮಿಸ್ ಯೂನಿವರ್ಸ್, ಮಿಸ್ ದ್ಯಾಟ್, ಮಿಸ್ ದಿಸ್ ಎಂದು ಪ್ರಶಸ್ತಿ ಕೊಟ್ಟು ನಗ್ನತೆಯನ್ನು, ಬಹಿರಂಗ ಸೌಂದರ್ಯವನ್ನು ಸನ್ಮಾನಿಸುವ, ಆದರಿಸುವ ಸಮಾಜಕ್ಕೆ ಖಂಡಿತವಾಗಿಯೂ ಪಥ್ಯವಲ್ಲ ಬುರ್ಖಾ. ಈ ರೀತಿಯ ಅಳತೆಗೆ ನಿಲುಕದ ಬಹುಪಾಲು ಮಹಿಳೆಯರು  ಕೀಳರಿಮೆಯಿಂದ ಬಳಲುತ್ತಿದ್ದರೆ ಅದೊಂದು ಸಮಸ್ಯೆ ಅಲ್ಲ ಇವರಿಗೆ. size and beauty obssessed ಸಮೂಹಕ್ಕೆ.

ಬುರ್ಖಾ ನಿಷೇಧಿಸುವಲ್ಲಿ  ಫ್ರಾನ್ಸ್ ಕಾನೂನನನ್ನು ಜಾರಿ ಗೊಳಿಸಿದಂತೆ ಇಂಗ್ಲೆಂಡ್ ಸಹಾ ಬುರ್ಖಾ ನಿಷೇಧ ಕಾನೂನನ್ನು ತರಬೇಕೆಂದು ಒತ್ತಾಯಿಸುತ್ತಿರುವ ಜನರು ಹೆಣ್ಣನ್ನು ಸೌಂದರ್ಯ  ಪ್ರಸಾಧನ ಉತ್ಪಾದಿಸುವವರ, ಕಾಮ ಪಿಪಾಸುಗಳ ಆಟಿಕೆಯಾಗಿ ಬಳಸಿಕೊಳ್ಳುತ್ತಾ ತಮ್ಮನ್ನು ತಾವು ನಾಗರೀಕರು ಎಂದು ಬೆನ್ನು ತಟ್ಟಿ ಕೊಳ್ಳುವವರ ದಾರ್ಷ್ಟ್ಯತನವನ್ನು ಮೆಚ್ಚಲೇ ಬೇಕು. ಬುರ್ಖಾ ಗುಲಾಮಗಿರಿಯ ಸಂಕೇತ, ಪುರುಷರ ಒತ್ತಾಯಕ್ಕೆ ಮಣಿದು ಮಹಿಳೆಯರು ಧರಿಸುತ್ತಾರೆ ಎಂದು ವಾದಿಸುವ ಸಮೂಹಕ್ಕೆ ಈ ಸತ್ಯದ ಅರಿವಾದದ್ದು ಯಾವಾಗಲೋ ಏನೋ? ಅವರಿಗೆ ಹೇಗೆ ಗೊತ್ತು ಇದು ಪುರುಷ ಹೇರಿದ ಕಟ್ಟಳೆ ಎಂದು? ಸ್ವಂತ ಇಷ್ಟದಿಂದ ಹಿಜಾಬ್ ಧರಿಸುವ ಮಹಿಳೆಯರನ್ನು ನಾನು ನೋಡಿದ್ದೇನೆ. ತನ್ನ ತಾಯಿ ಧರಿಸುವ ಹಿಜಾಬನ್ನು ನೋಡಿ ಪುಟ್ಟ ಮಗುವೂ ತಾಯಿಯನ್ನು ಅನುಕರಿಸಲು ನೋಡುತ್ತದೆ. ಹೊರಗೆ ಮಹಿಳೆಯರು ತಮಗಿಷ್ಟದ, ನವೀನ ಶೈಲಿಯ ಬಟ್ಟೆ ಧರಿಸಿ ಹೋಗುವುದನ್ನು ಕಂಡರೂ ಆ ಪುಟ್ಟ ಮಗುವಿಗೆ ತನ್ನ ತಾಯಿ ಧರಿಸುವ ಕಪ್ಪು ಬಣ್ಣದ ಬುರ್ಖಾ ಕರಾಳವಾಗಿ ಕಾಣೋದಿಲ್ಲ. ಇಲ್ಲಿ ಆ ಮುಗ್ಧ ಮಗು ಕಾಣೋದು ತನ್ನ ತಾಯಿಯ ನಾರ್ಮಲ್ ಉಡುಗೆ ಮಾತ್ರ. ಬುರ್ಖಾ ಪದ್ಧತಿ ಇಸ್ಲಾಮಿನ ನಿಯಮವೋ, ಕಟ್ಟಳೆಯೋ ಅಲ್ಲ. ಪವಿತ್ರ ಕುರಾನಿನಲ್ಲಿ ದೇವರು ನಿರ್ದೇಶಿಸಿದ್ದು ಹೆಣ್ಣು ಮತ್ತು ಗಂಡು ಮೈ ತುಂಬಾ ಉಡಲು. ಅಂಗ ಸೌಷ್ಟವ ಪ್ರದರ್ಶಿಸದಂತೆ ತಾಕೀತು. ಹೆಣ್ಣು ಗಂಡು ಇಬ್ಬರೂ ತಮ್ಮ ದೃಷ್ಟಿಗಳನ್ನು ಅನಾವಶ್ಯವಾಗಿ ಬೇಕೆಂದಲ್ಲಿ ಹರಿಬಿಡದೆ ನಡೆಯಲು ಅಪೇಕ್ಷೆ, ನೆಲ ನೋಡಿ ವಿನೀತರಾಗಿ ನಡೆಯಲು ಸೂಚನೆ. ಇವು ಮಾತ್ರ ಇರುವುದು ಕುರಾನಿನಲ್ಲಿ. ಬಟ್ಟೆ ಹೀಗೆ ಇರಬೇಕು, ಇಂಥ ಬಣ್ಣದ್ದೇ ಆಗಿರಬೇಕು ಎಂದು ಎಲ್ಲೂ ಹೇಳಿಲ್ಲ. ಹಾಗಿದ್ದರೆ ಬುರ್ಖಾ ಸಾರ್ವತ್ರಿಕವಾಗಿರುತ್ತಿತ್ತು. ವಿಶ್ವದ ಬಹುಪಾಲು ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದಿಲ್ಲ ಎಂದರೆ ನಿಮಗೆ ಅಚ್ಚರಿಯಾಗಬಹುದಲ್ಲವೇ? ದೂರದ ದೇಶಗಳ ಮಾತೇಕೆ ನಮ್ಮ ಪಕ್ಕದ ಕೇರಳದಲ್ಲೂ ಬಹುಪಾಲು ಮಹಿಳೆಯರು ಬುರ್ಖಾ ಧರಿಸುವುದಿಲ್ಲ. ಉದ್ದದ ತೋಳಿನ ರವಿಕೆ, ಮೈ ತುಂಬಾ ಸೀರೆ ಉಟ್ಟು ಕೊಳ್ಳುತ್ತಾರೆ. ಅಲ್ಲಿ ಯಾವ ಮುಲ್ಲಾ ಮಹಾಶಯರೂ ಫತ್ವಾ ಹೊರಡಿಸಲಿಲ್ಲ, ಕಪ್ಪು ಬಟ್ಟೆಯಿಂದ ಬಿಗಿದು ಕೊಳ್ಳಿ ನಿಮ್ಮ ಶರೀರವನ್ನು ಎಂದು. ಬುರ್ಖಾ ಒಂದು ಸಾಮಾಜಿಕ, ಸಾಂಸ್ಕೃತಿಕ ಉಡುಗೆ. ಸುಡಾನಿನ ಮಹಿಳೆಯರು ಸೀರೆ ಥರಾ ಕಾಣುವ  ಬಟ್ಟೆಯನ್ನು ಮೈ ತುಂಬಾ ಹೊದ್ದು ಕೊಳ್ಳುತ್ತಾರೆ. ಇರಾನಿನಲ್ಲಿ ಎಲ್ಲಾ  ಮಹಿಳೆಯರೂ ಧರಿಸುವುದಿಲ್ಲ. ಶೇಕಡಾ ೯೮ ಮುಸ್ಲಿಮರಿರುವ ತುರ್ಕಿ, ಟುನೀಸಿಯಾ ದೇಶಗಳ ಮಹಿಳೆಯರೂ ಸಹ ಬುರ್ಖಾ ಧಾರಿಗಳಲ್ಲ. ಅಲ್ಲಿ ಮುಲ್ಲಾಗಳ ಹಾವಳಿ ಇಲ್ಲ ಎಂದಲ್ಲ, ಆದರೆ ಇದೊಂದು ಧಾರ್ಮಿಕ ಉಡುಗೆ ಯಲ್ಲ ಎನ್ನುವ ಅರಿವಿರುವುದರಿಂದಲೇ ಅವರು ಅಲ್ಲಿನ ಮಹಿಳೆಯರ ಮೇಲೆ ಈ ವಸ್ತ್ರವನ್ನು ಹೇರದಿರುವುದು.

ಈ ಮೇಲಿನ ಮಾತಿಗೆ ಪುಷ್ಟಿಯಾಗಿ ಇತ್ತೀಚೆಗೆ ನಡೆದ ಘಟನೆಯೊಂದನ್ನು ನಿಮ್ಮ ಅವಗಾಹನೆಗೆ ತರಲು ಇಚ್ಛಿ ಸುತ್ತೇನೆ. ಪುರಾತನ ನಾಗರೀಕತೆಯ ತವರಾದ ಈಜಿಪ್ಟ್ ದೇಶ ಇಸ್ಲಾಂ ಧರ್ಮವನ್ನ ಅನುಸರಿಸುವ ದೇಶ. ಅಲ್ಲಿನ ವಿಶ್ವವಿಖ್ಯಾತ ವಿಶ್ವ ವಿದ್ಯಾಲಯ ಅಲ್- ಅಜ್ಹರ್ ಸ್ಥಾಪಿತ ವಾಗಿದ್ದು ಕ್ರಿ. ಷ ೯೫೦ ರಲ್ಲಿ. ಅಲ್ಲಿನ “ರೆಕ್ಟರ್” ಆಗಿದ್ದ ಇತ್ತೀಚೆಗೆ ದಿವಂಗತರಾದ ಶೇಖ್ ತಂತಾವೀ. ಇವರು ಜಗದ್ವಿಖ್ಯಾತ ಮುಸ್ಲಿಂ ವಿಧ್ವಾಂಸ. ಅತ್ಯಂತ ಕ್ಲಿಷ್ಟ ಶರಿಯಾ ದ ಸಮಸ್ಯೆಗಳಿಗೆ ಮುಸ್ಲಿಂ ವಿಶ್ವ ಉತ್ತರ ಅರಸೋದು ಇವರಲ್ಲಿ. ಆರು ತಿಂಗಳ ಹಿಂದೆ ನಡೆದ ವಿಶ್ವ ವಿದ್ಯಾಲಯದ ಸಮಾರಂಭವೊಂದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಸಭಿಕರಲ್ಲಿ ಒಬ್ಬ ಹದಿ ಹರೆಯದ ಯುವತಿಯೊಬ್ಬಳು ಹಿಜಾಬ್ ಮಾತ್ರವಲ್ಲದೆ ಕಣ್ಣು ಮಾತ್ರ ಕಾಣುವಂಥ “ನಿಕಾಬ್” ಸಹ ಧರಿಸಿದ್ದಳು. ಭಾಷಣ ಮಾಡುತ್ತಿದ್ದ ತಂತಾವೀ ಯುವತಿಗೆ ಹೇಳಿದರು ಮುಖದ ಮೇಲಿನ ನಿಕಾಬ್ ತೆಗೆಯುವಂತೆ. ಆಕೆ ಒಪ್ಪಲಿಲ್ಲ. ಒತ್ತಾಯಿಸಿದಾಗ ಆಕೆ ಹೇಳಿದಳು ಇದು ನನ್ನ ಧಾರ್ಮಿಕ ಉಡುಗೆ, ನನ್ನ ಸ್ವಂತ ಇಷ್ಟದಿಂದ ಧರಿಸಿದ್ದು ಎಂದು. ಇದನ್ನು ಕೇಳಿ ಕುಪಿತರಾದ ತಂತಾವೀ ಹೇಳದರು, ಸಾವಿರಕ್ಕೂ ಹೆಚ್ಚು ವರ್ಷಗಳ ಚರಿತ್ರೆಯಿರುವ ಈ ಸುಪ್ರಸಿದ್ಧ ವಿದ್ಯಾಲಯದ ಕುಲಪತಿಯಾದ ನನಗಿಂತ ನಿನಗೆ ಗೊತ್ತೋ ಇಸ್ಲಾಮಿನ ಉಡುಗೆ ಬಗ್ಗೆ? ನೀನು ಧರಿಸುತ್ತಿರುವ ಮುಖ ಮುಚ್ಚಿ ಕೊಳ್ಳುವ ನಿಕಾಬ್ ಇಸ್ಲಾಮಿನ ಕಾನೂನಲ್ಲ, ಅದೊಂದು ಸಾಮಾಜಿಕ ಉಡುಗೆ ಎಂದು ಹೇಳಿ ಆಕೆಯನ್ನು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡರು. ಅದೊಂದು ದೊಡ್ಡ ವಿವಾದವನ್ನೇ ಸೃಷ್ಟಿಸಿತು ಮುಸ್ಲಿಂ ಜಗತ್ತಿನಲ್ಲಿ, ವಿಶೇಷವಾಗಿ ಅರಬ್ ವಲಯಗಳಲ್ಲಿ. ಆಕೆ ಯಾರ ಬಲವಂತವೂ ಇಲ್ಲದೆ ತನ್ನ ಇಷ್ಟಾನುಸಾರ ಧರಿಸಿದ ವಸ್ತ್ರಕ್ಕೆ ಈ ವಿಧ್ವಾಂಸರ  ಆಕ್ಷೇಪವೇಕೆ ಎಂದು ಅವರನ್ನು ಟೀಕಿಸಲಾಯಿತು.

ಕುವೈತ್ ಅರಬ್ ಮುಸ್ಲಿಂ ರಾಷ್ಟ್ರ. ಅಲ್ಲಿನ ಸಂಸತ್ತಿನಲ್ಲಿ ಕೆಲವರು ಮಹಿಳಾ ಸದಸ್ಯೆಯರೂ ಇದ್ದಾರೆ. ಅವರಲ್ಲಿ ಇಬ್ಬರು ಸಂಸದೆಯರು ಹಿಜಾಬ್ ಧರಿಸುವುದಿಲ್ಲ. ಅರಬ್ ರಾಷ್ಟ್ರವಾದ ಮೇಲೆ ಧರ್ಮಗುರುಗಳ ವರ್ಚಸ್ಸು ಇಲ್ಲದ್ದಿಲ್ಲ, ಆದರೂ ಯಾವುದೇ ಧರ್ಮ ಗುರುವೂ ಇದುವರೆಗೆ ಆ ಸಂಸದೆಯರ ವಿರುದ್ಧ ಫತ್ವ ಹೊರಡಿಸಲಿಲ್ಲ.

ಮಧ್ಯ ಪ್ರಾಚ್ಯದ “ಜೋರ್ಡನ್” ದೇಶ ಪುರಾತನ ವಂಶಸ್ಥರ ರಾಜಮನೆತನ ಆಳುವ ದೇಶ. ಇಲ್ಲಿನ ರಾಜ ಅಬ್ದುಲ್ಲಾ ರ ಪತ್ನಿ “ರಾನಿಯಾ” ಹಿಜಾಬ ಧರಿಸುವುದಿಲ್ಲ. ಜೋರ್ಡನ್ ದೇಶದ ಧರ್ಮಗುರುಗಳು ಆಕೆಯ ವಿರುದ್ಧ ಫತ್ವ ಹೊರಡಿಸಲಿಲ್ಲ. ಜೋರ್ಡನ್ ದೇಶದ ರಾಣಿ ಮಾತು ದಿವಂಗತ ಬೆನಜೀರ್ ಭುಟ್ಟೋ ಹಿಜಾಬ್ ಧರಿಸದೆಯೂ ಮುಸ್ಲಿಮರಾಗಿರಲು ಸಾಧ್ಯ ಎಂದು ಜಗತ್ತಿಗೆ ತೋರಿಸಿಕೊಟ್ಟು ಇಸ್ಲಾಂ ಯಾವ ರೀತಿ ಶಿಷ್ಟಾಚಾರ ಮತ್ತು ಆಧುನಿಕತೆಯೊಂದಿಗೆ ಹೆಜ್ಜೆ ಹಾಕಬಲ್ಲದು ಎಂದು ತೋರಿಸಿ ಕೊಟ್ಟ ಮುಸ್ಲಿಂ ಮಹಿಳೆಯರು.    

ಒಬ್ಬ ಮಹಿಳೆ ಹಿಜಾಬ್ ಧರಿಸಿದ ಮಾತ್ರಕ್ಕೆ ಪರಿಪೂರ್ಣ ಮುಸ್ಲಿಮಳಾಗುವುದಿಲ್ಲ. ಹಿಜಾಬ್ ಧರಿಸದೆಯೂ ಮುಸ್ಲಿಂ ಮಹಿಳೆ ತನ್ನ ಇಸ್ಲಾಮೀ ಸಂಸ್ಕೃತಿಯನ್ನು ಹೆಮ್ಮೆಯಿಂದ ಕೊಂಡಾಡಬಹುದು. ಆದರೆ ಆಕೆ ಏನನ್ನು ಧರಿಸಬೇಕು ಏನನ್ನು ಧರಿಸಬಾರದು ಎಂದು ನಿರ್ಧರಿಸುವ ಸಮಾಜ ಅವಳಿಗೂ ಅವಳದೇ ಆದ ಹಕ್ಕುಗಳಿವೆ, ಆ ಹಕ್ಕನ್ನು ಚಲಾಯಿಸಿಕೊಳ್ಳುವ ಅವಕಾಶವನ್ನೂ ಆಕೆಗೆ ನೀಡಬೇಕು ಎನ್ನುವುದನ್ನು ಮರೆಯಬಾರದು.    

ಇನ್ನು ಓರ್ವ ಮಹಿಳೆ ತನಗಿಷ್ಟವಾದ ಬಟ್ಟೆ ತೊಟ್ಟರೆ ಅವಳ ಸ್ವಾತಂತ್ರ್ಯಕ್ಕೆ ಹೇಗೆ ಅವಳು ಧರಿಸುವ ವಸ್ತ್ರ ಮುಳುವಾಗುತ್ತದೆ ಅನ್ನೋದೇ ಒಂದು ದೊಡ್ಡ ಒಗಟು.        

ಹೆಣ್ಣಿನ ಸ್ವಾತಂತ್ರ್ಯದ ಬಗ್ಗೆ ಅತೀವ ಕಾಳಜಿ ತೋರಿಸುವ ಸಮಾಜ ಗಲಭೆ, ಜನಾಂಗ ಧ್ವೇಷ ಗಳಂಥ ಸಂದರ್ಭಗಳಲ್ಲಿ ಹೆಣ್ಣಿನ ಮೇಲೆ ನಡೆಯುವ ರಾಜಾರೋಷ ಅತ್ಯಾಚಾರ ಕಣ್ಣಿಗೆ ಗೋಚರಿಸೋಲ್ಲ ಏಕೆಂದರೆ ತಮಗೆ ಎಲ್ಲಿ ಬೇಕು ಅಲ್ಲಿ ಮಾತ್ರ  ಕಣ್ಣುಗಳನ್ನು ತೆರೆಯುತ್ತಾರೆ, ಬೇಡದೆಡೆ ತಾತ್ಕಾಲಿಕ, ಕುರುಡನ್ನು ಪ್ರದರ್ಶಿಸುತ್ತಾರೆ.   

ಸ್ವಾತಂತ್ರ್ಯದ ಹರಣದ ಬಗ್ಗೆ ಮಾತನಾಡುವ ಜನರಿಗೆ ಈವಾನ್ ಗೊಎಥ್ ಹೇಳಿದ ಮಾತು ನೆನಪಿಗೆ ತರಬೇಕು; “ತಾವು ಎಲ್ಲರಿಗಿಂತ ಸ್ವತಂತ್ರರು ಎಂದು ಭಾವಿಸಿ ನಡೆಯುವ ಜನರಷ್ಟು ಗುಲಾಮಗಿರಿಯಲ್ಲಿ ಬಂಧಿಸಲ್ಪಟ್ಟವರು  ಬೇರಾರಿಲ್ಲ”.

“None are more hopelessly enslaved than those who falsely believe they are free.”
von Goethe

 

ಹಿಜಾಬ್ ವಿವಿಧ ಧರ್ಮಗಳಲ್ಲಿ: ಯಹೂದ್ಯರು ತಮ್ಮ ಮಹಿಳೆಯರು ಶರೀರವನ್ನು ಸಂಪೂರ್ಣವಾಗಿ ಮುಚ್ಚುವಂಥ ವಸ್ತ್ರ ಧರಿಸಲು ಉತ್ತೆಜಿಸುತ್ತಿದ್ದರು. ಕೂದಲನ್ನು ಪ್ರದರ್ಶಿಸಿ ನಡೆಯುವುದು ಅಪರಾಧ. ಉಚ್ಚ ಕುಲೀನ ಸ್ತ್ರೀಯರು ತಲೆಯ ಮೇಲೆ ಬಟ್ಟೆ ಧರಿಸುತ್ತಿದ್ದರು ಮತ್ತು ಸಮಾಜದ ಕೆಳಸ್ತರದ ಮಹಿಳೆಯರು ಪ್ರತಿಷ್ಠೆ ಗಾಗಿ ತಲೆ ಕೂದಲನ್ನು ಮುಚ್ಚುತ್ತಿದ್ದರು. ಯಹೂದ್ಯ ಸಮಾಜದಲ್ಲಿ ವೇಶ್ಯೆಯರು ತಲೆ ಕೂದಲನ್ನು ಮರೆ ಮಾಚುವಂತಿಲ್ಲ.

ಕ್ರೈಸ್ತ ಧರ್ಮದಲ್ಲಿ: ಸಂತ “ಪಾಲ್” ಹೊಸ ಒಡಂಬಡಿಕೆಯಲ್ಲಿ ಹೇಳಿದ್ದು ಹೀಗೆ: ಪ್ರತೀ ಗಂಡಿನ ತಲೆಯೂ ಕ್ರೈಸ್ತನದು ಮತ್ತು ಪ್ರತೀ ಹೆಣ್ಣಿನ ತಲೆ ಗಂಡಿನದು ಮತ್ತು ಕ್ರಿಸ್ತನ ತಲೆ ದೇವರದು. ಪ್ರತೀ ಹೆಣ್ಣು ತಲೆ ಕೂದಲನ್ನು ಮರೆ ಮಾಚಲೇ ಬೇಕು ಇಲ್ಲಾ ತಲೆ ಬೋಳಿಸಿ ಕೊಳ್ಳಬೇಕು. ಗಂಡು ತಲೆ ಕೂದಲನ್ನು ಮರೆಮಾಚೋ ಅಗತ್ಯ ಇಲ್ಲ ಏಕೆಂದರೆ ಗಂಡು ದೇವರ ಪ್ರತಿ ರೂಪ. ಆದರೆ ಹೆಣ್ಣು ಗಂಡಿನ ಗೌರವ, ಘನತೆ. ಕ್ರೈಸ್ತ ಧರ್ಮ ಗುರುಗಳ ಪ್ರಕಾರ ಹೆಣ್ಣು ತಲೆ ಕೂದಲನ್ನು ಮರೆಮಾಚುವುದು ಆಕೆ ಗಂಡಿಗೆ ಮತ್ತು ದೇವರಿಗೆ ವಿಧೇಯಳಾಗಿರಬೇಕಾದ ಕುರುಹು.  ಯಹೂದ್ಯ ಮತ್ತು ಕ್ರೈಸ್ತ ಧರ್ಮದಲ್ಲಿ ಹಿಜಾಬ್ ಗಂಡಿಗೆ ಮತ್ತು ಸಮಾಜಕ್ಕೆ ಹೆಣ್ಣು ವಿಧೇಯಳಾಗುವ ನಿಟ್ಟಿನಲ್ಲಿ ಆಗ್ರಹಿಸಿದರೆ, ಬಯಸಿದರೆ ಇಸ್ಲಾಮ್ ಹಿಜಾಬನ್ನು ಬಯಸಿದ್ದು ಹೆಣ್ಣಿನ ನಮ್ರ ನಡತೆಯನ್ನು ಉತ್ತೇಜಿಸಲು ಮತ್ತು ಪರಪುರುಷರ ಆಸಕ್ತ ಕಣ್ಣುಗಳಿಂದ ರಕ್ಷಿಸಿಕೊಳ್ಳಲು.      

 

ಕೆನಡಾದ ಕ್ವೀನ್ಸ್ ವಿಶ್ವ ವಿದ್ಯಾಲಯ ಹೊರಡಿಸಿದ ಒಂದು ಪತ್ರದಲ್ಲಿ ಈ ಆಘಾತಕಾರಿ ಅಂಶಗಳು ಒಳಗೊಂಡಿದ್ದವು.  ಪ್ರತೀ ೬ ನಿಮಿಷ ಗಳಿಗೊಮ್ಮೆ ಹೆಣ್ಣಿನ ಮೇಲೆ ಲೈಂಗಿಕ ಕಿರುಕುಳ ನಡೆಯುತ್ತದೆ;

ಪ್ರತೀ ಮೂರು ಮಹಿಳೆಯರಲ್ಲಿ ಒಬ್ಬ ಮಹಿಳೆ ತನ್ನ ಜೀವಿತ ಕಾಲದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುತ್ತಾಳೆ.

ಪ್ರತೀ ನಾಲ್ವರು ಮಹಿಳೆಯರಲ್ಲಿ ಒಬ್ಬ ಮಹಿಳೆ ತನ್ನ ಜೀವಿತ ಕಾಲದಲ್ಲಿ ಬಲಾತ್ಕಾರದ ಅಪಾಯಕ್ಕೆ ಸಿಲುಕಿರುತ್ತಾಳೆ.

ಪ್ರತೀ ಎಂಟು ಮಹಿಳೆಯರಲ್ಲಿ ಒಬ್ಬ ಮಹಿಳೆ ತನ್ನ ಕಾಲೇಜು ವ್ಯಾಸಂಗದ ವೇಳೆ ಲೈಂಗಿಕ ಶೋಷಣೆಗೆ ಒಳಪತ್ತಿರುತ್ತಾಳೆ.

ಆಧುನಿಕ ವಿಶ್ವದಲ್ಲಿ ಆಧುನಿಕ ಮನೋಭಾವದ ವ್ಯಕ್ತಿಗಳು ತಮ್ಮ ಆಧುನಿಕತೆಗೆ ವಸ್ತ್ರ ವನ್ನು ಮಾನದಂಡ ವಾಗಿರಿಸ ಕೂಡದು. ಗಂಡು ಮುಚ್ಚಿದಷ್ಟೂ gentleman ಮತ್ತು ಹೆಣ್ಣು ತೆರೆದಷ್ಟೂ cultured lady. ಈ ಮಾನ ದಂಡವನ್ನು ಎಲ್ಲರ ಮೇಲೂ ಹೇರಕೂಡದು.

ವೈಯಕ್ತಿವಾಗಿ ನಾನು ನಿಕಾಬ್ ಅಭಿಮಾನಿಯಲ್ಲ. ಬುರ್ಖಾ ಧರಿಸದೆಯೂ ಹೆಣ್ಣು ತನ್ನ ಅಂಗ ಸೌಷ್ಠವ ಪ್ರದರ್ಶಿಸದೆ ಬದುಕಬಹುದು. ಇತ್ತೀಚೆಗೆ ವಿವಾಹಿತರಾದ ಮಹೇಂದ್ರ ಸಿಂಗ್ ಧೋನಿ ಯವರ ಪತ್ನಿ ತುಂಬು ತೋಳಿನ ( full sleeved) ಚೂಡಿದಾರ್ ಧರಿಸಿ ತಲೆಯ ಮೇಲೆ ದುಪಟ್ಟಾ ಹಾಕಿಕೊಂಡು ಅಭಿನಂದಿಸಲು ಬಂದ ಜನರನ್ನು ಸ್ವೀಕರಿಸಿದರು ಎಂದು ಯಾರೋ ಹೇಳಿದರು. ಇಲ್ಲಿ ಈ ನವವಿವಾಹಿತೆ ತನಗರಿವಿಲ್ಲದೆಯೇ ಇಸ್ಲಾಮೀ ಸಂಸ್ಕೃತಿಯ ಉಡುಗೆಗೆ ಮಾರು ಹೋಗಿರಬೇಕು.       

ಈ ಲೇಖನ ಬರೆಯುತ್ತಿರುವಾಗ ನನ್ನ ಪತ್ನಿ ಕೇಳಿದಳು ಯಾವುದರ ಬಗ್ಗೆ ಬರೆಯುತ್ತಿದ್ದೀರಿ ಎಂದು. ಯೂರೋಪಿನಲ್ಲಿ ಬುರ್ಖಾ ಬ್ಯಾನ್ ಮಾಡ್ತಾರಂತೆ, ಅದರ ಬಗ್ಗೆ ಬರೆಯುತ್ತಿದ್ದೇನೆ ಎಂದೆ. ಅರ್ಥವಾಗದೆ ಕೇಳಿದಳು, ಬುರ್ಖಾ ಬ್ಯಾನ್ ಮಾಡ್ತಾರ? ಏಕೆ? ಕಾರಣ ಏನು?

ಕಾರಣ ನನಗೂ ಗೊತ್ತಿಲ್ಲ. ಕೆಲವೊಮ್ಮೆ  ಸಿಂಪಲ್ ಪ್ರಶ್ನೆಗಳಿಗೆ ಸಿಂಪಲ್ ಉತ್ತರ not so simple.

ಬರದಿರಿ ನಮ್ಮ ದೇಶಕ್ಕೆ

ಒಂದು ಕಡೆ ವಿಶ್ವ ನಮ್ಮ ಪ್ರಗತಿಯ ಬಗ್ಗೆ ಮೆಚ್ಚುಗೆ ತೋರಿದರೆ ಮತ್ತೊಂದೆಡೆ ನಮ್ಮ ಅಧಿಕಾರಿ, ರಾಜ ಕಾರಣಿಗಳಿಗೆ ತಮ್ಮ ದೇಶಗಳಿಗೆ ಬರದಂತೆ ವಿಸಾ ನೀಡದೆ ಅಪಮಾನ ಮಾಡುತ್ತಿದೆ. ವಿಶ್ವ ರಾಜಕಾರಣದಲ್ಲಿ ನಮ್ಮದೇ ಆದ ಛಾಪು ಮೂಡಿಸಲು ಯತ್ನಿಸುತ್ತಿರುವ ನಮಗೆ ವಿವಿಧೆಡೆಗಳಿಂದ ಊಹಿಸಲಾಗದ ತೊಡಕುಗಳು ಎದುರಾಗುತ್ತಿವೆ. ನಮ್ಮ ಮೇಲೆ ಹಗೆ ಸಾಧಿಸುವುದೇ ತಮ್ಮ ಕಸುಬು ಎಂದುಕೊಂಡಿರುವ ನೆರೆಯ ದೇಶಕ್ಕೆ ಅದರ ಎಲ್ಲಾ ರೀತಿಯ ಹುನ್ನಾರಗಳ ಅರಿವಿದ್ದೂ ಪಾಶ್ಚಾತ್ಯ ರಾಷ್ಟ್ರಗಳು ತಮ್ಮದೃಷ್ಟಿಯನ್ನು ಮತ್ತೆಲ್ಲೋ ಬೀರಿ ಪರೋಕ್ಷ ಬೆಂಬಲವನ್ನು ನೀಡುತ್ತಿವೆ. ಅವರ ಪ್ರಕಾರ ಪಾಕ್ ನಿಜವಾಗಿಯೂ “ಪಾಕ್” (ಶುದ್ಧ). ನಮ್ಮ ವಿದೇಶಾಂಗ ಇಲಾಖೆಯನ್ನು ನಿರ್ವಹಿಸುತ್ತಿರುವವರಿಗೆ ತಮ್ಮ ಸೂಟು, ಗರಿಗರಿಯಾದ ರೇಷ್ಮೆ ಸೀರೆ ಪ್ರದರ್ಶಿಸುವುದೇ ತಮ್ಮ ಪ್ರತಿಭೆ ಎಂದು ಬಗೆದು ನಡೆಯುತ್ತಿರುವುದು ಖೇದಕರ.

ಉತ್ತರ ಅಮೇರಿಕಾ ಖಂಡದ ಕೆನಡಾ ದೇಶ ಅಂತರ ರಾಷ್ಟ್ರೀಯ ರಾಜಕಾರಣದಲ್ಲಿ ಅಷ್ಟೇನೂ ದೊಡ್ಡ ಪಾತ್ರ ವಹಿಸದ ದೇಶ. ಈ ದೇಶಕ್ಕೆ ಹೋಗಲು ಗಡಿ ಭದ್ರತಾ ಪಡೆಗೆ ಸೇರಿದ ನಿವೃತ್ತ ಪೇದೆ ವಿಸಾ ಕೇಳಿದಾಗ ಸಿಕ್ಕ ಉತ್ತರ  “ಕುಪ್ರಸಿದ್ಧ ಹಿಂಸಾತ್ಮಕ ಪಡೆ” (notoriously violent force) ಗೆ ಸೇರಿದವರಿಗೆ ಕೆನಡಾ ಒಂದು ಕನಸು ಎಂದು. ನಮ್ಮ ಅರೆ ಸೈನಿಕ ಪದೆಯನ್ನು “ಕುಪ್ರಸಿದ್ಧ” ಎನ್ನುವ ಮಟ್ಟಿಗೆ ಬೆಳೆಯಿತು ದಾರ್ಷ್ಟ್ಯತನ ಈ ಸದಾ ಮಗುಮ್ಮಾಗಿ ಇರುವ ದೇಶಕ್ಕೆ.  ಇನ್ನಿತರ ಸೈನಿಕ ಅಧಿಕಾರಿಗಳಿಗೂ ಇದೇ ರೀತಿ ಒಂದಲ್ಲ ಒಂದು ರೀತಿಯ “ನೀವು ನಮ್ಮ ದೇಶಕ್ಕೆ ಬರಲು ಅರ್ಹರಲ್ಲ” ಎಂದು ಹಣೆ ಪಟ್ಟಿ. ಈಗ ಒಂದು ಪ್ರಶ್ನೆ. ಪಕ್ಕದ ಪಾಕಿಸ್ತಾನದ ಅಧಿಕಾರಿಗಳಿಗೂ ಇದೇ ರೀತಿಯ ಉಪಚಾರ ಸಿಕ್ಕಿದೆಯೇ? ಸಿಕ್ಕಿರಲಿಕ್ಕಿಲ್ಲ. ಏಕೆಂದರೆ ಅಲ್ಲಿನ ಅಧಿಕಾರಿ, ರಾಜಕಾರಣಿಗಳು ಸಮಯ ಸಾಧಕರು, ಅವರಿಗೆ ರೊಟ್ಟಿಯ ಯಾವ ಮಗ್ಗುಲಿಗೆ ಬೆಣ್ಣೆ ತಗುಲಿದೆ ಎಂದು ಚೆನ್ನಾಗಿ ಗೊತ್ತು, ಅದರ ಪ್ರಕಾರವೇ ನಡೆದುಕೊಂಡು ತಮ್ಮ ಕಾರ್ಯ ಸಾಧಿಸಿ ಕೊಳ್ಳುತ್ತಾರೆ. ನಾವಾದರೋ, ಬೆಳ್ಳಗಿರುವುದೆಲ್ಲಾ ಹಾಲು ಎನ್ನುವ ಸಮೂಹ. ಅಷ್ಟು ಮಾತ್ರವಲ್ಲ, ಬಿಳಿಯರ ಯುದ್ಧವನ್ನು ಪಾಕಿ ಸೈನಿಕರು ಮಾಡುತ್ತಿದ್ದಾರೆ ಎನ್ನುವ ಕಾರಣಕ್ಕೂ ಅವರ ತಂಟೆಗೆ ಯಾರೂ ಹೋಗುವುದಿಲ್ಲ.  

ಇಂಥ ಕಸಿವಿಸಿಯುಂಟು ಮಾಡುವ ಘಟನೆಗಳಿಂದ ನಮಗೆ ಮುಕ್ತಿ ಕೊಡಿಸಲು ಚಾಣಕ್ಯ ಪುರಿಯ ಸಾಹೇಬರುಗಳಿಂದ (ಅಲ್ಲಿ ಈಗ ಮಹಿಳಾ ಸಾಹೇಬರೂ ಇದ್ದಾರೆ) ಸಾಧ್ಯವೇ? ಕೇವಲ ಕೋಪದಿಂದ ಒಂದು ಪತ್ರ ಬರೆದು ಸ್ಪಷ್ಟೀಕರಣ ಕೇಳಿ, ಸಂಜೆಯಾದ ಕೂಡಲೇ ಇದೇ ಬಿಳಿಯರ ಜೊತೆ ಸೇರಿಕೊಂಡು ಪಂಚತಾರಾ ಹೋಟೆಲುಗಳಲ್ಲಿ ಮಜಾ ಉಡಾಯಿಸುವವರಿಂದ ದೇಶ ತನಗೆ ಸಲ್ಲಬೇಕಾದ ಮಾನವನ್ನು ನಿರೀಕ್ಷಿಸ ಬಹುದೇ?

ಈ ತೆರನಾದ ಘಟನೆಗಳಿಗೆ ಬಿಳಿಯರ ದೃಷ್ಟಿದೋಷ ಕಾರಣವೋ ಅಥವಾ ನಮ್ಮಲ್ಲೇ ಏನಾದರೂ ನಮಗೇ ಕಾಣದ ಐಬಿದೆಯೋ ತಿಳಿಯದು. ಹೌದು ಕೆಲವೊಮ್ಮೆ ಪ್ರಮಾದಗಳು ಸಂಭವಿಸಿರಬಹುದು, ಅಂಥ ಘಟನೆಗಳನ್ನ ಆಧಾರವಾಗಿಟ್ಟು ಕೊಂಡು ನಮ್ಮನ್ನು ಈ ರೀತಿ ಹೀನಾಯವಾಗಿ ನಡೆಸಿಕೊಂಡರೆ ಅದಕ್ಕೆ ನಮ್ಮ ಉತ್ತರ ಹೇಗಿರಬೇಕು? ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು. ಅಲಿಪ್ತ ನೀತಿಯ ಮೇಲೆ ವಿಪರೀತ ಅವಲಂಬನೆ ಮಾಡಿದ್ದರಿಂದ ನಮ್ಮಲ್ಲಿನ ರೋಷ ಮಾಯವಾಗಿ ಎಲ್ಲವನ್ನೂ ಸೈರಿಸಿಕೊಂಡು ಸೋತ ನಗೆಯೊಂದಿಗೆ ನಮ್ಮ ದಾರಿ ನೋಡಿ ಕೊಳ್ಳುವ ನಮ್ಮ ಜಾಯಮಾನ ನಮಗೇ ಮುಳು ವಾಗುತ್ತಿದೆ. ವಿದೇಶಾಂಗ ಇಲಾಖೆಗೆ ಹೊಸರಕ್ತ ತುಂಬಿ, ಈ ಇಲಾಖೆ ನಡೆಸಲು ವಯಸ್ಸಾದವರ ಅಗತ್ಯವಿಲ್ಲ, ಯುವ ಅಧಿಕಾರಿಗಳಿಗೆ ಸಿಗಲಿ ಚುಕ್ಕಾಣಿ.

ರಾಜ್ಯದ ರಾಜಕಾರಣ

ದಿನಾ ಬೆಳಗಾದರೆ ಮುಂಬೈ ಸ್ಟಾಕ್ ನ ಬಗ್ಗೆ, dow jones index ಮತ್ತು new york ಸ್ಟಾಕ್ exchange ಗಳ ಪಾಯಿಂಟ್ಸ್ ಬಗ್ಗೆ ಕೆಲವರು ಆತಂಕ ಮತ್ತು ತವಕದಿಂದ ಕೂತರೆ, ಇನ್ನು ಕೆಲವರು ಇಂದು ಮತ್ತೆ ನಮ್ಮ ಮುಖ್ಯ ಮಂತ್ರಿಗಳು ಗಳ ಗಳ ಅತ್ತರೆ ಎಂದು ಕುತೂಹಲದಿಂದ ವೀಕ್ಷಿಸುವುದು ಒಂದು ಪರಿಪಾಠವಾಗಿದೆ. ರಾಜ್ಯದ ರಾಜಕಾರಣ ದಿನೇ ದಿನೇ ವೈವಿದ್ಯತೆ ಕಾಣುತ್ತಿದ್ದು ಈ ವೈವಿಧ್ಯತೆಗೆ ಕಾರಣ ಹೊರಗಿನ ರಾಜ್ಯದವರು ಎನ್ನುವ ಅಂಶ ಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಿದೆ. ಆಂಧ್ರ ಮೂಲದ ರೆಡ್ಡಿ ಸೋದರರ ಚದುರಂಗದಾಟಕ್ಕೆ ನಮ್ಮ ರಾಜ್ಯದ ಸೀದಾ ಸಾದಾ ಮನುಷ್ಯನ ಕಬಡ್ಡಿ ಕಸರತ್ತುಗಳು ಸೋತು ಸುಣ್ಣವಾಗುತ್ತಿದ್ದು ರಾಜ್ಯದ ಜನತೆಗೆ ಪುಕ್ಕಟೆ ಮನರಂಜನೆ ಒದಗಿಸುತ್ತಿದೆ.

ಸರಿ ಮು. ಮಂತ್ರಿಗಳು take the bull by its horn ತತ್ವವನ್ನು ಅಳವಡಿಸಿಕೊಂಡು ಅಧಿಕಾರ ಉಳಿಸಿಕೊಳ್ಳುವುದನ್ನು ಬಿಟ್ಟು ಆಟಿಕೆ ಕಳಕೊಂಡ ಮಗುವಿನಂತೆ ಏಕೆ ಅಳುತ್ತಿದ್ದಾರೆ ಎನ್ನುವುದು ಅರ್ಥವಾಗದ ವಿಷಯ. ರಾಜಕಾರಣಿಗಳಿಗೆ ಅಧಿಕಾರ ಎನ್ನುವುದು ಮಕ್ಕಳಿಗೆ ಆಟಿಕೆ ಇದ್ದಂತೆ. ಅದು ಕೈ ತಪ್ಪಿದಾಗ ಅಥವಾ ಯಾರಾದರೂ ಕಸಿದುಕೊಳ್ಳಲು ಹವಣಿಸಿದಾಗ ವಿಹ್ವಲರಾಗುವುದೂ ಸಹಜವೇ. ಅದರಲ್ಲೇನೂ ತಪ್ಪಿಲ್ಲ ಎನ್ನಿ. ಜೀವನ ಪೂರ್ತಿ ಜನಸೇವೆ ಮಾಡಿ ಬದುಕಿನ ಮುಸ್ಸಂಜೆಯ ಕ್ಷಣಗಳಲ್ಲಿ ಒಂದಿಷ್ಟು ಅಧಿಕಾರದ ರುಚಿ ಉಣ್ಣುವ ಎಂದರೆ ಅದಕ್ಕೂ ಒಲ್ಲೆ ಎನ್ನುವ spoil sport ಆಡಿ ಖುಷಿ ಪಡುವ ವಿರೋಧಿಗಳು. ಎಡ್ಡಿಜೀ ಮು. ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದಾಗ ನನಗನ್ನಿಸಿದ್ದು ಈ ಸಾಧಾರಣ, ಕಪಟತನ ಅರಿಯದ ವ್ಯಕ್ತಿಯನ್ನು ಘಟಾನುಘಟಿ ಗಳು ಹರಿದು ತಿನ್ನುವುದರಲ್ಲಿ ಸಂಶಯವಿಲ್ಲ ಎಂದು. ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಅಧಿಕಾರ ಏರಿದ ಭಾಜಪಕ್ಕೂ ಅಧಿಕಾರದ nuances ಏನು ಎನ್ನುವುದು ತಿಳಿಯಲಿಲ್ಲ. ಅದು ಕಲಿಯುವ ಹೊತ್ತಿಗೆ ಕುಮಾರ ಸ್ವಾಮಿ ಅಂಡ್ ಕಂಪನಿ ಸರಕಾರದ ಚರಮಗೀತೆ ಹಾಡಿ ಚಿಯರ್ಸ್ ಎಂದು ಕುಣಿಯಬಹುದು ಮತ್ತು ಎಡ್ಡಿಜಿ ಶರಣ ಶರಣೆಯರ ನಾಡಿಗೆ ಮರಳಿ ವಚನ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಬಹುದು.