ತೇರೆ ಬಿನ್ ಲಾದೆನ್…

ಲಾದೆನ್, ನೀನಿಲ್ಲದೆ… ಸಿನೆಮಾ ದೊಡ್ಡ ಸುದ್ದಿ ಮಾಡಿತು ನಮ್ಮ ದೇಶದಲ್ಲಿ. ಲಾದೆನ್ ಬಗೆಗೆ ಅಮೆರಿಕೆಯ ಅತಿ ಆಸಕ್ತಿಯ ಕುರಿತು ರಚಿಸಿದ ಈ ಚಿತ್ರ ವೀಕ್ಷಕರನ್ನು ರಂಜಿಸಿತು. ಲಾದೆನ್ ನ         enigma ರಾಜಕಾರಣಿ, ಸುದ್ದಿ ಪಂಡಿತರನ್ನು ಮಾತ್ರವಲ್ಲ ಚಿತ್ರರಂಗವನ್ನೂ ಬಾಧಿಸಿತು. ಹತ್ತು ಹಲವು ವರ್ಷಗಳಿಂದ ಒಂದೇ ಸಮನೆ ಅಮೇರಿಕಾ ಲಾದೆನ್ ಗಾಗಿ ಪ್ರಪಂಚ ಜಾಲಾಡಿದರೂ ಸಿಗದೇ ಹತಾಶವಾಗಿದ್ದಾಗ ಇದ್ದಕ್ಕಿದ್ದಂತೆ, ಯಾವ ಸುಳಿವೂ, ಮುನ್ಸೂಚನೆಯೂ ಇಲ್ಲದೆ justice is done, Laden is gone ಎಂದು ಬೆಳ್ಳಂ ಬೆಳಗ್ಗೆ  ಕೇಳಿ ತಬ್ಬಿಬ್ಬಾದ ನಮಗೆ ಲಾದೆನ್ ಸಾವು ಸಿನಿಮೀಯ ರೀತಿ ಎಂದು ಅನ್ನಿಸಿದರೆ ತಪ್ಪಾಗಲಾರದು. ಹತ್ತು ವರ್ಷಗಳಿಂದ ಅತ್ಯಾಧುನಿಕ ಉಪಗ್ರಹಗಳಿಂದ ಹಿಡಿದು ಅಮೇರಿಕನ್ ಸೈನಿಕರ high tech binocular ಗಳಿಗೂ ಸಿಗದೇ ತಪ್ಪಿಸಿಕೊಳ್ಳುತ್ತಿದ್ದ ಬಿನ್ ಲಾದೆನ್ ದಿಢೀರನೆ ಕೊಲ್ಲಲ್ಪಟ್ಟ ಎಂದರೆ ಒಂದು ರೀತಿಯ ಸಿನಿಮೀಯ ತಾನೇ?  

ಲಾದೆನ್ ಬರೀ ಅಮೆರಿಕೆಗೆ ಮಾತ್ರವಲ್ಲ, ನಮ್ಮ ದೇಶದಲ್ಲೂ ಕುತೂಹಲ, ಭಯ, ಆಕ್ರೋಶ ಬರಿಸಿದ ಹೆಸರು. ಅಮೆರಿಕೆಯ ಮೇಲೆ ಮತ್ತು ವಿಶ್ವದ ಇತರೆ ನಗರಗಳಲ್ಲಿ ತನ್ನ ಸಾವಿನ ಏಜೆಂಟರನ್ನು ಹರಿಬಿಟ್ಟ ಲಾದೆನ್ ಕೊನೆಗೂ ಸೆಣೆಸುತ್ತಾ  ಉರುಳಿ ಬಿದ್ದ ಅಮೆರಿಕೆಯ ನಾವಿಕ ದಳದ ಯೋಧರ ಗುಂಡುಗಳಿಗೆ,  ಪಾಕಿಸ್ತಾನದ “ಅಬೋಟ್ಟಾಬಾದ್” ನಗರದಲ್ಲಿ.

ಅಬೋಟ್ಟಾಬಾದ್, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಿಂದ ಕೇವಲ ೩೫ ಮೈಲು ದೂರ ಇರುವ, ಪ್ರತಿಷ್ಠಿತ ಸೈನಿಕ ತರಬೇತಿ ಕಾಲೇಜು ಹೊಂದಿದ ಈ ನಗರದಲ್ಲಿ ಬಿನ್ ಲಾದೆನ್ ಸುಮಾರು ಐದು ವರ್ಷಗಳಿಗೂ ಹೆಚ್ಚು ಕಾಲ ಅವಿತು ಕೊಂಡಿದ್ದ ಎಂದರೆ ಯಾರೂ ದಂಗಾಗುವರು. ಅಮೆರಿಕೆಯಂತೂ ಮೂರ್ಛೆ ಬೀಳುವುದೊಂದು ಬಾಕಿ. ಭಯೋತ್ಪಾದನೆ ತಡೆಯಲು, ಲಾದೆನ್ ಕ್ರುತ್ಯಗಳನ್ನು ತಡೆಯಲು ಪಾಕಿಸ್ತಾನದ ಬೆಂಬಲ ಪಡೆದಿದ್ದ ಅಮೇರಿಕಾ ಈ ಸಹಾಯಕ್ಕೆ ಕೊಡುತ್ತಿದ್ದ ಫೀಸು ವರ್ಷಕ್ಕೆ ೩ ಬಿಲ್ಲಿಯನ್ ಡಾಲರ್. ಯಾಚಕ ದೇಶ. ಇಂಥದ್ದೇ ಮತ್ತೊಂದು ಯಾಚಕ ದೇಶ ಇಸ್ರೇಲ್. ಬಿನ್ ಲಾದೆನ್ ನನ್ನು ಹುಡುಕುತ್ತಿದ್ದೇವೆ, ತಾಲಿಬಾನಿ ಗಳನ್ನು ಸದೆ ಬಡಿಯುತ್ತಿದ್ದೇವೆ ಎಂದು ಸುಳ್ಳು ಸುಳ್ಳೇ ಭರವಸೆ ನೀಡುತ್ತಾ ಅಮೆರಿಕೆಯ ಡಾಲರುಗಳ ಲಂಚವನ್ನು ಲಜ್ಜೆಯಿಲ್ಲದೆ ಸ್ವೀಕರಿಸಿದ ಪಾಕ್ ಅಮೆರಿಕೆಗೆ ಮೋಸ ಮಾಡಿತೆಂದೇ ವಿಶ್ವದ, ಅಮೆರಿಕನ್ನರ ನಂಬಿಕೆ. ಈ ರೀತಿ ಪುಕ್ಕಟೆ ಯಾಗಿ ಸಿಗುತ್ತಿದ್ದ ಸಂಪತ್ತನ್ನು ನುಂಗುತ್ತಿದ್ದ ಪಾಕಿಗೆ ಲಾದೆನ್ ಚಿನ್ನದ ತತ್ತಿ ಇಡುವ ಕೋಳಿ. main source of income. ಪಾಪ, ಲಾದೆನ್ ಸಾವಿನಿಂದ ದೊಡ್ಡ, ಭರಿಸಲಾರದ ನಷ್ಟ ಪಾಕಿಗೆ.  

ಪಾಕಿಸ್ತಾನ ಮಾತ್ರ ತನಗೆ ಲಾದೆನ್ ನ ಇರುವಿನ ಬಗ್ಗೆ ಗೊತ್ತೇ ಇಲ್ಲ ಎಂದು ಆಣೆ ಹಾಕಿ ಹೇಳಿದರೂ circumstantial evidence ಇದಕ್ಕೆ ವ್ಯತಿರಿಕ್ತ. ಈ ವಿವಾದದಲ್ಲಿ ಮತ್ತೊಂದು ಸಮಸ್ಯೆ ಇದೆ. ಅಮೇರಿಕಾ ಮತ್ತು ಪಾಕಿಸ್ತಾನ chronic liars. ಶುದ್ಧ ಸುಳ್ಳರು. ಈ ಇಬ್ಬರ ತಗಾದೆ ಬಗೆಹರಿಸಲು ಇಲ್ಲಿದೆ ಲಿಟ್ಮಸ್ ಟೆಸ್ಟ್. ಲಾದೆನ್ ಎಲ್ಲಿದ್ದಾನೆ ಎನ್ನುವುದು ಪಾಕಿಗೆ ತಿಳಿದಿತ್ತೆ? ಪಾಕಿನ ಸಹಾಯವಿಲ್ಲದೆ ಅಮೆರಿಕೆಯ ಬ್ಲಾಕ್ ಹಾಕ ಹೆಲಿಕಾಪ್ಟರ್ ಗಳು ಹೇಗೆ ತಾನೇ ಲಾದೆನ್ ಇರುವಲ್ಲಿಗೆ ಬರಲು ಸಾಧ್ಯ? ಅಲ್ಕೈದಾ ಸಂಘಟನೆಯ ಕೆಂಗಣ್ಣಿಗೆ ಗುರಿಯಾಗಬಹುದು ಎನ್ನುವ ಭೀತಿ ಪಾಕಿಗೆ ತಾನು ಈ ಸಾಹಸದಲ್ಲಿ ಪಾಲು ಗೊಂಡಿಲ್ಲ ಎಂದು ಹೇಳಲು ಪ್ರೇರೇಪಿಸುತ್ತಿರಬಹುದೇ? ಪಾಕಿಸ್ತಾನದ ಪರಿಸ್ಥತಿ ಅಡಕ್ಕೊತ್ತರಿ ಯಲ್ಲಿ ಸಿಕ್ಕ ಅಡಿಕೆಯಂತೆ. ಲಾದೆನ್ ಇರುವ ಸ್ಥಳ ತೋರಿಸಿ ಅಮೆರಿಕೆಗೆ ಸಹಕಾರ ನೀಡಿದೆ ಎಂದರೆ ಅಲ್ ಕೈದಾ ಬಿಡೋಲ್ಲ, ಲಾದೆನ್ ಎಲ್ಲಿದ್ದಾನೆ ಎಂದು ತನಗೆ ತಿಳಿದಿಲ್ಲ ಎಂದರೆ ಅಮೇರಿಕಾ ಬಿಡೋಲ್ಲ. ಸುಮಾರು  ಐದು ವರ್ಷಗಳ ಕಾಲ ದೊಡ್ಡ ಪಾಕಿಸ್ತಾನದ ರಾಜಧಾನಿಯ ಹಿತ್ತಲಿನಲ್ಲಿ,  ಬಂಗಲೆಯೊಂದರಲ್ಲಿ ವಾಸಿಸುತ್ತಿದ್ದ ಲಾದೆನ್ ಬಗ್ಗೆ ಪಾಕ್ ಸೈನ್ಯಕ್ಕೆ, ಸರಕಾರಕ್ಕೆ ತಿಳಿದಿಲ್ಲ ಎಂದರೆ ದೊಡ್ಡ ಆಶ್ಚರ್ಯವೇ. ಒಂದು ವೇಳೆ ಪಾಕಿಗೆ ಲಾದೆನ್ ಪಾಕಿನಲ್ಲಿ ಇರುವ ಅರಿವು ಇಲ್ಲದಿದ್ದರೆ ಅಮೇರಿಕಾ ತಾನು ನೀಡುವ ಉದಾರ ಧನ ಸಹಾಯ ಮುಂದುವರೆಸಬಹುದು. ಅಥವಾ ಲಾದೆನ್ ಪಾಕಿಸ್ತಾನದಲ್ಲಿ ಇರುವುದನ್ನು ಅಮೆರಿಕೆಗೆ ತಿಳಿಸದೇ ಡಬಲ್ ಗೇಂ ಆಡಿದ್ದರೆ ಪಾಕಿಸ್ತಾನವನ್ನು ದಾರಿಗೆ ತರುವ ಕೆಲಸ ಅಮೇರಿಕಾ ಶೀಘ್ರ ಶುರು ಮಾಡಬೇಕು. ಇದೇ ಟೆಸ್ಟು. Litmus ಟೆಸ್ಟು.    

ಬಿನ್ ಲಾದೆನ್ ಇಲ್ಲದೆ ಪಾಕ್ ಹೇಗೆ ತಾನೇ ಜೀವಿಸೀತು ಎನ್ನುವುದೀಗ ಆಸಕ್ತಿಕರ ಪ್ರಶ್ನೆ. ಪ್ರೀತೀ,  ನೀನಿಲ್ಲದೆ ನಾ ಹೇಗಿರಲಿ… ಎಂದು ಶೋಕ ಗೀತೆ ಹಾಡುತ್ತಿರಬಹುದೇ ಪಾಕಿಗಳು?

೨೦೦೧ ರ ಅಮೆರಿಕೆಯ ವಿರುದ್ಧದ ಧಾಳಿಗೆ ಬಿನ್ ಲಾದೆನ್ ನನ್ನು ನೇರ ಹೊಣೆಯಾಗಿರಿಸಿದ ಜಾರ್ಜ್ ಬುಶ್, ಬಿನ್ ಲಾದೆನ್ wanted, dead or alive ಎಂದು ಘೋಷಿಸಿದ. ಅಮೆರಿಕೆಯ ಮೇಲೆ ನಿರ್ದಯೀ, ಭೀಕರ ಧಾಳಿ ಮಾಡಿ ತಾನು ಒಂದು ದಿನ ಪೂರ್ತಿ ರಹಸ್ಯ ಅಡಗು ತಾಣವೊಂದರಲ್ಲಿ ದಿನ ಕಳೆಯುವಂತೆ ಮಾಡಿದ ಬಿನ್ ಲಾದೆನ್ ನ ತಲೆಗೆ ೨೫ ಮಿಲ್ಲಿಯನ್ ಡಾಲರ್ ಮೊತ್ತದ ಬೆಲೆಯನ್ನೂ ಕಟ್ಟಿದ ಬುಶ್.  ಹೊಗೆಯುಗುಳುತ್ತಾ ನೆಲಕ್ಕುರುಳಿದ ನ್ಯೂಯಾರ್ಕ್ ನ ಗಗನ ಚುಂಬಿ ಕಟ್ಟಡಗಳು ಅಮೆರಿಕನ್ನರ ಚಿತ್ತ ಕಲಕಿದವು. ಕ್ರುದ್ಧ ಅಮೇರಿಕಾ ಬಿನ್ ಲಾದೆನ್ ಅಡಗಿದ್ದ ಆಫ್ಘಾನಿಸ್ತಾನ ವನ್ನು ಆಕ್ರಮಣ ಮಾಡಿತು. ಬಿನ್ ಲಾದೆನ್ ಎಲ್ಲಿದ್ದರೂ ಹೊಗೆ ಹಾಕಿ ಹೊರತೆಗೆಯುತ್ತೇನೆ ಎಂದು ಘರ್ಜಿಸಿದ ಬುಶ್ ಆಫ್ಘಾನಿಸ್ತಾನದ ಗುಡ್ಡಗಾಡು ಗಳನ್ನು ಮಾತ್ರವಲ್ಲ ಅಲ್ಲಿನ ತೋರಾ ಬೋರಾ ಗವಿ ಸಮುಚ್ಛಯಗಳನ್ನು ಜಾಲಾಡಿದ. ಸೋವಿಯೆಟ್ ಸೇನೆಗೆ ಚಳ್ಳೆ ಹಣ್ಣು ತಿನ್ನಿಸಿದ್ದ, ಸ್ವತಃ ಅಮೆರಿಕನ್ನರಿಂದಲೇ ತರಬೇತಿ ಪಡೆದ, ಸ್ವಾತಂತ್ರ್ಯ ಹೋರಾಟಗಾರ ಎಂದು ರೋನಾಲ್ಡ್ ರೇಗನ್ನರಿಂದ ಹೊಗಳಿಸಿಕೊಂಡಿದ್ದ  ಬಿನ್ ಲಾದೆನ್ ರಂಗೋಲಿ ಕೆಳಗೆ ತೂರಿಕೊಳ್ಳುವುದನ್ನು ಕರಗತ ಮಾಡಿಕೊಂಡ.  

ಬಿನ್ ಲಾದೆನ್,  wanted, dead or alive ಎಂದ ಅಮೇರಿಕಾ ಲಾದೆನ್ ಇರುವ ಮನೆಯ ಮೇಲೆ ಧಾಳಿ ಮಾಡಿ, ೪೦ ನಿಮಿಷಗಳ ಕಾಳಗದಲ್ಲಿ ಎರಡು ಗುಂಡುಗಳನ್ನು ಲಾದೆನ್ ತಲೆಗೆ ಸಿಡಿಸಿ ಕೊಂದಿದ್ದಾರೂ ಏಕೆ? ಅವನನ್ನು ಜೀವಂತ ಸೆರೆ ಹಿಡಿದು, ಅಮೆರಿಕೆಯ USS COLE , ಆಫ್ರಿಕಾದ ದಾರುಸ್ಸಲಾಮ್, ಸ್ಪೇನ್ ನ MADRID, ಲಂಡನ್, ಸೌದಿ ಅರೇಬಿಯಾದ ದಹರಾನ್, ಇರಾಕ್, ಸೋಮಾಲಿಯಾ, ಇಂಡೋನೇಷ್ಯಾದ ಬಾಲಿ ಮುಂತಾದ ನಗರಗಳ ಮೇಲೆ ಧಾಳಿ ಮಾಡಿದ ಈತನನ್ನು ವಿಚಾರಣೆ ಮಾಡಬಹುದಿತ್ತಲ್ಲ. ಅಮೆರಿಕೆಯ ಕಾರ್ಯ ವೈಖರಿ ಆ ದೇಶದಷ್ಟೇ ನಿಗೂಢ. ಕ್ರಿಸ್ಟಫರ್ ಕೊಲಂಬಸ್ ಕಂಡು ಹಿಡಿಯುವವರೆಗೂ ನಿಗೂಢವಾಗಿದ್ದ ದೇಶವಲ್ಲವೇ ಅಮೇರಿಕಾ? ಈತನನ್ನು ಸೆರೆ ಹಿಡಿದು ಅಮೇರಿಕಾ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿ ಕೊಳ್ಳಲು ಇಷ್ಟ ಪಡಲಿಲ್ಲ. ವಿಚಾರಣೆ ವೇಳೆ ಬಿನ್ ಲಾದೆನ್ ಬಾಯಿ ಬಿಟ್ಟರೆ ತಾವು ಕೇಳಲು ಇಚ್ಛಿಸುವುದಕ್ಕಿಂತ ಸ್ವಲ್ಪ ಹೆಚ್ಚನ್ನೇ ಬಡಬಡಿಸಬಹುದು. ಈ ಕಸಿವಿಸಿಯಿಂದ ಪಾರಾಗಲು ಇರುವ ಒಂದೇ ದಾರಿ ಎಂದರೆ ನೇರ ಆಕ್ರಮಣ. ಈ ಆಕ್ರಮಣದಲ್ಲಿ ಅಮೇರಿಕಾ ಯಶಸ್ಸನ್ನು ಕಂಡಿತು.         

ತಾನು ಕರಿಯನಾದ ಒಂದೇ ಕಾರಣಕ್ಕೆ ದಿನವೂ ಬಿಳಿ ಅಮೆರಿಕನ್ನರ ಕುಹಕಕ್ಕೆ, ಅವಹೇಳನಕ್ಕೆ  ಗುರಿಯಾಗುತ್ತಿದ್ದ ಒಬಾಮ ಕೊನೆಗೆ ತನ್ನ ಜೀವನದ ಅತಿ ದೊಡ್ಡ ಅವಮಾನವನ್ನು ಎದುರಿಸಬೇಕಾಯಿತು. ಒಬಾಮಾರ ಜನನ ಪ್ರಮಾಣ ಪತ್ರವನ್ನು ಬಲ ಪಂಥೀಯ ರಿಪಬ್ಲಿಕನ್ ಪಕ್ಷ ಕೇಳಿತು. ಒಬಾಮಾ ತನ್ನ ಜನನ ಪ್ರಮಾಣ ಪತ್ರದ ಜೊತೆ ಜೊತೆಗೇ ಅಮೆರಿಕನ್ನರ ಸಿಂಹಸ್ವಪ್ನನಾಗಿದ್ದ ಲಾದೆನ್ ನ ಸಾವಿನ ಪ್ರಮಾಣ ಪತ್ರವನ್ನೂ ಅಮೆರಿಕನ್ನರಿಗೆ ನೀಡಿ ತಾನು ಕಾರ್ಯಕ್ಷಮತೆಯಲ್ಲಿ ಯಾವ ಬಿಳಿ ಅಧ್ಯಕ್ಷನಿಗೂ ಕಡಿಮೆಯಲ್ಲ ಎನ್ನುವುದನ್ನು ತೋರಿಸಿ ಕೊಟ್ಟರು.   

ಒಸಾಮಾ ಬಿನ್ ಮುಹಮ್ಮದ್ ಬಿನ್ ಅವಾದ್ ಬಿನ್ ಲಾದೆನ್.  ೫೪ ವರ್ಷ ಪ್ರಾಯದ, ಆರಡಿ ಮೂರಿಂಚು ಎತ್ತರದ ಸ್ಫುರದ್ರೂಪಿ ಮತ್ತು ಆಗರ್ಭ ಶ್ರೀಮಂತ ಆಫ್ಘನ್ ಗುಡ್ಡ ಗಾಡಿನ ಜನರ ವಿಶ್ವಾಸ, ಪ್ರೀತಿ, ಅಭಿಮಾನ ಗಳಿಸಲು ಕಾರಣವಾಗಿದ್ದಾದರೂ ಏನು? ಜನರೊಂದಿಗೆ ಸುಲಭವಾಗಿ, ಆತ್ಮೀಯತೆಯಿಂದ ಬೆರೆಯುತ್ತಿದ್ದ ಈತ ಸೌಮ್ಯ ಮಾತುಗಾರಿಕೆಯಿಂದ, ತನ್ನ ಉದಾರ ಸ್ವಭಾವದಿಂದ ಅಲ್ಲಿನ ಯುವಜನರ ಮನ ಗೆದ್ದಿದ್ದ. ಕೋಟ್ಯಾಧೀಶ ಮನೆತನದಿಂದ ಬಂದ ಈತ ಐಶಾರಾಮದ ಬದುಕನ್ನು ಬಿಟ್ಟು ಆಫ್ಘನ್ ಗುಡ್ಡಗಾಡಿನಲ್ಲಿ ಒಣಗಿದ ಚಪಾತಿ ತಿನ್ನುತ್ತಾ ತಮ್ಮೊಂದಿಗೆ ಇರುತಿದ್ದ ಈತನನ್ನು ಕಂಡು ಜನ ಮಾರುಹೋದರು. ಸೋವಿಯೆಟ್ ಸೈನ್ಯದೊಂದಿಗೆ ಹೋರಾಡಿದ ಈತ ಓರ್ವ ಸೈನಿಕನೊಂದಿಗೆ hand to hand combat ನಲ್ಲಿ ಸೈನಿಕನ್ನು ಕೊಂದು ಅವನ kalashnikov ಬಂದೂಕನ್ನು ವಶಪಡಿಸಿ ಕೊಂಡಿದ್ದ. ಈ ಬಂದೂಕು ಅವನ ಅಭಿಮಾನದ ಸ್ವತ್ತಾಗಿತ್ತು.

ಈತ ಆರಂಭಿಸಿದ ಅಲ್ ಕೈದಾ ಒಂದು ಸಂಘಟನೆಯೋ ಆಗಿರದೆ ಒಂದು ತೆರನಾದ ideology ಆಗಿತ್ತು. ಸದಸ್ಯ ಶುಲ್ಕವಾಗಲೀ, ಯಾವುದೇ formal induction ಆಗಲಿ ಬೇಕಿಲ್ಲದ ಈ ವಿಚಾರಧಾರೆಗೆ ಮೂರು ಅಂಶಗಳೇ ಉರುವಲಾಗಿ ಕೆಲಸ ಮಾಡುತ್ತಿದ್ದವು. ಆಕ್ರೋಶ, ನಿರಾಶೆ, ನಿಸ್ಸಹಾಯಕತೆ (anger, frustration, desperation).  ಒಂದು ಕಡೆ ಮುಸ್ಲಿಂ ದೇಶಗಳಲ್ಲಿನ ಆಳುವವರ ಭ್ರಷ್ಟಾಚಾರ ಸಾಲದು ಎಂಬಂತೆ ಅಮೆರಿಕೆಯ ಮೇಲಿನ ವಿಪರೀತ ಅವಲಂಬನೆ ಮತ್ತು ಅರಬ್ಬರ ಸಂಪತ್ತನ್ನು ಲೂಟಿ ಹೊಡೆಯುತ್ತಾ ಇಸ್ರೇಲ್ ದೇಶವನ್ನು ಸಾಕುತ್ತಿದ್ದ ಅಮೆರಿಕೆಯ ಆಟ ಈತನಲ್ಲಿ ಆಕ್ರೋಶ ಹುಟ್ಟಿಸಿತ್ತು. ಸೌದಿ ದೊರೆಗಳ ವಿರುದ್ಧವೂ ಈತ ಸಮರ ಸಾರಿದ ನಂತರ ಇವನ ವಿರೋಧಿಗಳ ಪಟ್ಟಿ ದೊಡ್ಡದಾಗುತ್ತಾ ಹೋಯಿತು. ಈತನ ನೂರಾರು ಹಿಂಬಾಲಕರಲ್ಲಿ ಹಲವರನ್ನು ಕೊಂದು, ನೂರಾರು ಜನರನ್ನು ಜೈಲಿಗೆ ತಳ್ಳಿ ಅಲ್ ಕೈದಾ ಪಿಡುಗನ್ನು ಕೊನೆಗಾಣಿಸಿದ ಸೌದಿ ಸರಕಾರ ಭಯೋತ್ಪಾದನೆ ತಡೆಯುವಲ್ಲಿ ಯಾವ ಕ್ರಮ ತೆಗೆದು ಕೊಳ್ಳುವುದಕ್ಕೂ ತಾನು ಹೇಸುವುದಿಲ್ಲ ಎಂದು ವಿಶ್ವಕ್ಕೆ ತೋರಿಸಿ ಕೊಟ್ಟಿತು.   

ಯಹೂದಿಗಳ ಕೈಯ್ಯಲ್ಲೂ, ಅಮೆರಿಕೆಯ ಕೈಯ್ಯಲ್ಲೂ ಮುಸ್ಲಿಮರ ಮಾರಣ ಹೋಮ ನೋಡಿದ ಬಿನ್ ಲಾದೆನ್ ಪ್ರತಿಕ್ರಯಿಸಿದ್ದು ಹಿಂಸಾ ಮಾರ್ಗದಿಂದ. ಸುಮಾರು ೧೫೦೦ ವರ್ಷಗಳ ಚರಿತ್ರೆ ಇರುವ ಇಸ್ಲಾಂ ಧರ್ಮಕ್ಕೆ ಬಹುಶಃ ಸ್ವತಃ ಮುಸ್ಲಿಂ ಆದ ಬಿನ್ ಲಾದೆನ್ ಮಾಡಿದಷ್ಟು ಅಪಕಾರ ಬೇರಾರೂ ಮಾಡಿರಲಾರ ರೇನೋ? ತನ್ನ ಕುಕೃತ್ಯಗಳಿಂದ ಎರಡು ಯುದ್ಧಗಳಿಗೆ ಕಾರಣನಾದ, ಎರಡು ದಶಲಕ್ಷಕ್ಕೂ ಅಧಿಕ ಮುಸ್ಲಿಮರ ಸಾವಿಗೆ ಸಾಕ್ಷಿ ನಿಂತ ಬಿನ್ ಲಾದೆನ್ ಅದ್ಯಾವ ರೀತಿ ತಾನು ನಂಬಿದ ಧರ್ಮದ ಸೇವೆ ಮಾಡಿದನೋ ಅವನೇ ಬಲ್ಲ.  ವಿಶ್ವದ ಡಜನ್ ಗಟ್ಟಲೆ ಹೆಚ್ಚು ನಗರಗಳಲ್ಲಿ ಸಾವು ನೋವನ್ನು ತಂದು ನಿಲ್ಲಿಸಿದ ಬಿನ್ ಲಾದೆನ್ ಕೊನೆಗೂ ಹಿಂಸೆಯ ಮೂಲಕವೇ ತನ್ನ ಜೀವ ಕಳೆದುಕೊಂಡ. ಇಂಡೋನೇಷ್ಯಾದ “ಬಾಲಿ” ಯಿಂದ ಹಿಡಿದು ಆಫ್ರಿಕಾದ  ನೈರೋಬಿ ವರೆಗೆ ಸಾವು ನೋವಿನ ಕರಾಳ ಕಂಬಳಿಯನ್ನು ಹರಡಿದ ಬಿನ್ ಲಾದೆನ್ “ವಿನಾಕಾರಣ ಒಬ್ಬನನ್ನು ಕೊಂದರೆ ಇಡೀ ಮನುಕುಲವನ್ನು ಕೊಂದಂತೆ” ಎಂದ ಹೇಳಿದ ತನ್ನ ಭಗವಂತನ ಮುಂದೆ ನಿಂತು ಯಾವ ಸಮಜಾಯಿಷಿ ನೀಡುವನೋ?

ಬಿನ್ ಲಾದೆನ್ ನಿರ್ಗಮನದಿಂದ ನಮ್ಮೀ ವಿಶ್ವ ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಗೆ ಕಾಲಗರ್ಭದಲ್ಲಿ ಅಡಗಿದೆ  ಉತ್ತರ.

ಟ್ವಿಟ್ಟರ್ ನಲ್ಲಿ ಸಿಕ್ಕಿದ್ದು:

Kentucky Fried Chicken ಶುರು ಮಾಡಿದ “ಕರ್ನಲ್ ಸ್ಯಾಂಡರ್ಸ್” ನ ನಿಧನದೊಂದಿಗೆ KFC ಯ franchising ನಿಲ್ಲಲಿಲ್ಲ. ಅದೇ ರೀತಿ ಅಲ್ ಕೈದಾ ಸ್ಥಾಪಕನ ಸಾವಿನಿಂದ ಅಲ್ ಕೈದಾ ಸಹ ಮುಗಿಯೋದಿಲ್ಲ.  ಆದರೆ ಇದೇ ವೇಳೆ, ಅಂತರಾಷ್ಟ್ರೀಯ ಖ್ಯಾತಿಯ, ಸಂಪಾದಕ ಭಾರತೀಯ ಮೂಲದ ಫರೀದ್ ಜಕರಿಯಾ ಹೇಳಿದ್ದು, loss of a symbol can end a movement.  

ವಿ. ಸೂ: ನನ್ನ ಈ ಲೇಖನ ಬಿನ್ ಲಾದೆನ್ ನ ಅವಸಾನ ಮತ್ತು ಅವಸಾನದ ಕ್ಷಣಗಳನ್ನು ಅಮೆರಿಕೆಯ ವೃತ್ತಾಂತವನ್ನು ಆಧರಿಸಿದ್ದು. ಯಾವುದೇ independent confirmation ಯಾರಿಗೂ ಲಭ್ಯವಾಗಿಲ್ಲ.      

 

Switzerland. ಭೂಮಿಯ ಮೇಲಿನ ಸ್ವರ್ಗ

Switzerland. ಭೂಮಿಯ ಮೇಲಿನ ಸ್ವರ್ಗ ಮಾತ್ರವಲ್ಲ ಸ್ವರ್ಗ ನವವಿವಾಹಿತ ಶ್ರೀಮಂತ ಜೋಡಿಗಳ ಮಧುಚಂದ್ರ ದ ತಾಣ ಕೂಡಾ. ಯುವ ಜೋಡಿಗಳ ಡ್ರೀಂ ಡೆಸ್ಟಿನೇಶನ್. ನಮ್ಮ ಕಾಶ್ಮೀರದಂತೆ. ಮನೋಹರ, ಹಿಮಚ್ಛಾದಿತ ಆಲ್ಪ್ಸ್ ಪರ್ವತ ಶ್ರೇಣಿ, swiss army knife, ವಿಶ್ವ ಪ್ರಸಿದ್ಧ Lindt chocolate, ಬೆಲೆಬಾಳುವ ವಾಚುಗಳ ಉತ್ಪಾದನೆ, ಮತ್ತು ವಿಶ್ವ ರಾಜಕಾರಣದಲ್ಲಿ ಯಾರ ಗೊಡವೆಗೂ ಹೋಗದೆ ತಟಸ್ಥ ನೀತಿ ಅನುಸರಿಸುವ ಒಂದು ಪುಟ್ಟ, ಅತಿ ಶ್ರೀಮಂತ ದೇಶ ಸ್ವಿಟ್ಜರ್ ಲ್ಯಾಂಡ್. ಇದು ನಮ್ಮ ಮುಗ್ಧ  ತಿಳಿವಳಿಕೆ ಈ ಪುಟ್ಟ ದೇಶದ ಬಗ್ಗೆ. 

ಆದರೆ ತನ್ನ ಸುತ್ತಲೂ ಶುಭ್ರ, ಮಂಜಿನ ಪರ್ವತವನ್ನೇ ಇಟ್ಟುಕೊಂಡ ಈ ಪುಟ್ಟ ದೇಶ ತನ್ನ ಒಡಲೊಳಗೆ ಇಟ್ಟುಕೊಂಡಿರುವುದು, ಶ್ರೀಮಂತವಾಗಿರುವುದು ಪಾಪದ ಹಣದ ಸಹಾಯದಿಂದ ಎಂದು ಹೇಳಿದರೆ ಹೌಹಾರುವಿರಾ?  

ವಿಶ್ವದ ಎಲ್ಲಾ ಭ್ರಷ್ಟ ರಾಜಕಾರಣಿ, ಅಧಿಕಾರಿ, ಕೈಗಾರಿಕೋದ್ಯಮಿ, ಕಳ್ಳ ಸಾಗಣೆದಾರ, ಮಾದಕ ದ್ರವ್ಯದ ವ್ಯಾಪಾರಿ ಹೀಗೆ ಹತ್ತು ಹಲವು ವರ್ಣರಂಜಿತ ವ್ಯಕ್ತಿತ್ವಗಳು ಲೂಟಿಗೈದ ಹಣವನ್ನು ಬಚ್ಚಿಡಲು ಆರಿಸಿಕೊಂಡ ತಾಣವೇ ಸ್ವಿಟ್ಜರ್ ಲ್ಯಾಂಡ್. ಫ್ರಾನ್ಸ್, ಜರ್ಮನಿ, ಆಸ್ಟ್ರಿಯ, ಇಟಲಿ ದೇಶಗಳಿಂದ ಸುತ್ತುವರೆದ ಸ್ವಿಸ್ಸ್, ಒಳ್ಳೆ ಬೆಚ್ಚಿಗಿನ ದೇಶ ಲೂಟಿ ಕೋರರಿಗೆ, ಪುಂಡರಿಗೆ. ಇದಕ್ಕಿಂತ ಬೆಚ್ಚಗಿನ, ರಹಸ್ಯ ಸ್ಥಳ ಬೇರೆಲ್ಲಿ ಸಿಗಲು ಸಾಧ್ಯ ಕಳ್ಳ ಧನವನ್ನು ಬಚ್ಚಿಡಲು, ಅಲ್ಲವೇ?   

ಭಾರತೀಯರು ಕೋಟಿಗಟ್ಟಲೆ ತೆರಿಗೆ ವಂಚಿಸಿದ, ನಮ್ಮ ಸಂಪನ್ಮೂಲ ಕದ್ದ, ಲಂಚದ ಮೂಲಕ ಗಳಿಸಿದ ಪಾಪದ ಹಣವನ್ನೂ ಸ್ವಿಸ್ ರೀತಿಯದೇ ಆದ Liechtenstein (ಲೀಚ್ಟೆನ್ ಸ್ಟೈನ್, ಯೂರೋಪ್ ನ ಮತ್ತೊಂದು ಮೈಕ್ರೋ ಸ್ಕೋಪಿಕ್ ದೇಶ )  ಬ್ಯಾಂಕ್ ನಲ್ಲಿ ಹೂತು ಹಾಕಿರುವುದನ್ನು ತೆಹೆಲ್ಕಾ ಬಯಲಿಗೆ ಹಾಕಿದೆ. ಸುಮಾರು ಹದಿನೈದು ಜನರ ಹೆಸರನ್ನು ಬಹಿರಂಗ ಗೊಳಿಸಿರುವ ತೆಹೆಲ್ಕಾ ಬರುವ ದಿನಗಳಲ್ಲಿ ಇನ್ನಷ್ಟು ಮಾಹಿತಿಯನ್ನು ಹೊರಗೆಡವಲಿದೆ.  

ಸ್ವಿಸ್ ದೇಶದಲ್ಲಿ ಅಕ್ರಮವಾಗಿ ಧನ ಗುಡ್ಡೆ ಹಾಕಿರುವ ಜನರ ಹೆಸರುಗಳನ್ನು ಅಲ್ಲಿನ ಬ್ಯಾಂಕುಗಳು ಬಹಿರಂಗ ಪಡಿಸಬೇಕು. ನಮ್ಮ ಸಂಪನ್ಮೂಲಗಳನ್ನು ಲೂಟಿ ಮಾಡಿದ್ದೂ ಅಲ್ಲದೆ ಲೂಟಿಗೈದ ಸಂಪತ್ತಿಗೆ ತೆರಿಗೆಯನ್ನೂ ಕಟ್ಟದೆ ದುರಹಂಕಾರದಿಂದ ಮೆರೆಯುವ, ಶ್ರೀಮಂತರು ತಾವು ತಿಂದಿದ್ದನ್ನು ಕಕ್ಕಬೇಕು. ದೇಶದಲ್ಲಿ ಆಗಾಗ ಹೊರಬೀಳುತ್ತಿರುವ ಪ್ರತೀ ಹಗರಣದ ಹಿಂದೆಯೂ ಲಕ್ಷಾಂತರ ಕೋಟಿ ರೂಪಾಯಿಗಳ ಲೂಟಿಯ ಮಾಹಿತಿ ಇದ್ದೂ ನಾವು ಏನೂ ಮಾಡಲಾಗದ ಅಸಹಾಯಕ ಪರಿಸ್ಥಿತಿ.  ಅದರ ಮೇಲೆ ಭಾರತ ಬಡ ದೇಶ ಎನ್ನುವ ಪಟ್ಟ ಬೇರೆ.  ಹೆಚ್ಚು ಎಂದರೆ ಅವನು ರಾಜಕಾರಣಿಯಾದರೆ ರಾಜೀನಾಮೆ ನೀಡಬಹುದು ಅಷ್ಟೇ. ರಾಜೀನಾಮೆ ನಂತರ ತಾನು ಕಬಳಿಸಿದ ಸಂಪತ್ತನ್ನು ಜೀವನ ಪೂರ್ತಿ ತಾನು ತನ್ನ ಮಕ್ಕಳು ತಿನ್ನಬಹುದು. ಜನರ ಮನ್ನಣೆಯನ್ನೂ ಗಳಿಸಿಕೊಳ್ಳಬಹುದು. ಇಂಥ ಲಕ್ಷಾಂತರ ಕೋಟಿ ರೂಪಾಯಿಗಳನ್ನು ಒಳಗೊಂಡ ಹಗರಣಗಳನ್ನು ನೋಡಿದಾಗ ನಮಗನ್ನಿಸದೆ ಇರುತ್ತದೆಯೇ ನಮ್ಮ ದೇಶ ನಾವೆಣಿಸಿದಂತೆ ಬಡ ದೇಶವಲ್ಲ ಎಂದು?  

ತನ್ನ ಸ್ವ- ರಕ್ಷಣೆಗಾಗಿ ಅಥವಾ ಇಂಧನದ ಅವಶ್ಯಕತೆಗಾಗಿ ಅಣು ಸ್ಥಾವರಗಳನ್ನು ನಿರ್ಮಿಸಿದ್ದಕ್ಕೆ ಇರಾನಿನ ಮೇಲೆ ಹರಿ ಹಾಯುವ ಪಾಶ್ಚಾತ್ಯ ದೇಶಗಳು ಸ್ವಿಸ್ ತೆರನಾದ ಮೋಸದ ಜಾಲದ ಬಗ್ಗೆ ಮಾತ್ರ ಮೌನ ತಾಳಿರುವುದು  ಆಷಾಢ ಭೂತಿತನದ ಪರಮಾವಧಿ. ಕೊಳಕು ಹಣವನ್ನು ಒಡಲಲ್ಲಿಟ್ಟುಕೊಂಡು ವಿಶ್ವಕ್ಕೆ ತಾನು ಸಭ್ಯಸ್ಥ ಎಂದು ತೋರಿಸುವ ಸ್ವಿಸ್ ಪರಿಪಾಠ ಹೇಸಿಗೆ ಹುಟ್ಟಿಸುವಂಥದ್ದು. ಮೋಸದ, ಲಂಚದ ಹಣವನ್ನು ರಹಸ್ಯವಾಗಿ,  ಜೋಪಾನವಾಗಿರಿಸಿ ಬಡ ದೇಶಗಳಲ್ಲಿರುವ ಲಂಚಗುಳಿತನದ ಬಗ್ಗೆ ಮರುಕ ತೋರುತ್ತಾ ತಾನು ವಿಶ್ವದಲ್ಲಿ ಲಂಚ ರಹಿತ ದೇಶ ಎಂದು ತೋರಿಸಿಕೊಳ್ಳುವ ದೇಶದ ಬಗ್ಗೆ ಏನೆನ್ನಬೇಕೋ ತಿಳಿಯದು. ಬ್ಯಾಂಕಿಂಗ್ ಗೌಪ್ಯವನ್ನು ಕಾಪಾಡಲು ಸ್ವಿಟ್ಜರ್ ಲ್ಯಾಂಡ್ ನ ೭೩ % ಜನ ರ ಬೆಂಬಲವಿದೆಯಂತೆ. ಇಲ್ಲದೆ ಏನು, ಈ ಕಳ್ಳ ಹಣದ ನೆರವಿನಿಂದಲೇ ಅಲ್ಲವೇ ಅವರ ಬಾಳು ಬೆಳಗುತ್ತಿರುವುದು.

ಭಯೋತ್ಪಾದಕರು ಯಾವುದಾದರೂ ದೇಶದಲ್ಲಿ ಅಡಗಿ ಕೂತರೆ ಅವರನ್ನು ಹೊಗೆ ಹಾಕಿ ಹೊರಕ್ಕೆಳೆಯುವ ಅಮೆರಿಕೆಯಾಗಲಿ, ಅಥವಾ ಇನ್ಯಾವುದೇ ದೇಶವಾಗಲೀ ಸ್ವಿಸ್ ಬ್ಯಾಂಕುಗಳಲ್ಲಿ ಬಡ ದೇಶಗಳ ಧನ ಲೂಟಿ ಮಾಡಿ ಕಲೆಹಾಕಿದ್ದಕ್ಕೆ ಸ್ವಿಸ್ ದೇಶವನ್ನು ದಂಡಿಸಲು ಸಾಧ್ಯವೇ? ಭಯೋತ್ಪಾದಕ ಕೃತ್ಯದಲ್ಲಿ ಒಬ್ಬ ಭಾಗಿಯಾಗಿಲ್ಲದಿದ್ದರೂ ಓರ್ವ  ಭಯೋತ್ಪಾದಕನಿಗೆ ಆಶ್ರಯ ನೀಡುವುದೂ ಭಯೋತ್ಪಾದನೆಗೆ ಸಹಕರಿಸಿದ್ದಂತೆ. ಈ ಮಾನದಂಡವನ್ನು ಸ್ವಿಸ್ ನಂಥ ದೇಶಗಳ ಮೇಲೆ ಏಕೆ ಉಪಯೋಗಿಸಬಾರದು?  ಲೂಟಿ ಮಾಡಿದವ ಮಾತ್ರ ಕಳ್ಳನಲ್ಲ, ಅವನ ಲೂಟಿಯನ್ನು ಜಾಗರೂಕತೆಯಿಂದ ಕಾಯುವುದೂ ಠಕ್ಕತನವೇ.  

ಸ್ವಿಸ್ ದೇಶದ ಗಿರಾಕಿಗಳಲ್ಲಿ ಬರೀ ಲಂಚ ತಿನ್ನುವ ರಾಜಕಾರಣಿಗಳು ಮಾತ್ರವಲ್ಲ. ಮೆಕ್ಸಿಕೋ ದೇಶದ ಮಾದಕ ದ್ರವ್ಯ ಮಾರುವ ದೊರೆಗಳು ಸಹ ಇಲ್ಲಿ ಹಣ ಅಡಗಿಸಿಡುತ್ತಾರೆ. ಅಂದರೆ ಪ್ರಪಂಚವನ್ನು ಕಾಡುತ್ತಿರುವ ಎಲ್ಲ ರೀತಿಯ ಪೀಡೆಗಳಿಗೆ ಸ್ವಿಸ್ ನೇರ ಹೊಣೆ ಎಂದರೆ ತಪ್ಪಾಗಬಹುದೇ?

ನೈಜೀರಿಯಾದ ಸಾನಿ ಅಬಾಚ, ಕೀನ್ಯಾದ ಡೇನಿಯಲ್ ಅರಪ್ ಮೊಯ್, ಫಿಲಿಪ್ಪಿನ್ಸ್ ದೇಶದ ಮಾರ್ಕೋಸ್, ನೆರೆಯ ಪಾಕಿಸ್ತಾನದ ಭುಟ್ಟೋ ಪರಿವಾರ, ಇಂಥ ಸರ್ವಾಧಿಕಾರಿಗಳು ಮತ್ತು ಭ್ರಷ್ಟರು ಸ್ವಿಸ್ ದೇಶದ ಮಿತ್ರರುಗಳು. ಆಂಗ್ಲ ಭಾಷೆಯಲ್ಲಿನ ಗಾದೆ; A person is known by the company he keeps.   

ವಿಶ್ವ ಸಮುದಾಯದಲ್ಲಿ ಸ್ವಿಸ್ ತಟಸ್ಥ ದೇಶವಾದರೆ ಮಾತ್ರ ಸಾಲದು, ಒಂದು ಜವಾಬ್ದಾರಿಯುತ ದೇಶವಾಗಿ ವಿಶ್ವದ ಬಡಜನರ, ಹತಾಶೆಗೂ ಸಹ ಸ್ಪಂದಿಸಬೇಕಾದ್ದು ಅತ್ಯಗತ್ಯ. ಬಡದೇಶಗಳ ಸಂಪತ್ತನ್ನು ಲೂಟಿ ಮಾಡಿದ ನಾಯಕರುಗಳ ಬ್ಯಾಂಕ್ ಖಾತೆಯನ್ನು ರಹಸ್ಯವಾಗಿರಿಸಿ ತನ್ಮೂಲಕ ಹಗಲು ದರೋಡೆಗೆ ಪರೋಕ್ಷ ಸಹಾಯ ನೀಡುತ್ತಿರುವ ಸ್ವಿಸ್ ಒಂದು ಪರಾವಲಂಬಿ ದೇಶ ಎನ್ನುವ ಬಿರುದು ಕಟ್ಟಿಕೊಂಡು ಬದುಕುವುದು ಬೇಡ. ಶೀತಲ ವಾತಾವರಣದ ಜನರ ಭಾವನೆಗಳು ಶೀತಲವಾಗಿಬಿಟ್ಟರೆ ಆಗುವ ಅನಾಹುತಕ್ಕೆ ಸ್ವಿಸ್ಸ್ ದೇಶವೇ ಸಾಕ್ಷಿಯೇನೋ? ಹಸಿವು, ರೋಗ, ಕುಡಿಯುವ ಸ್ವಚ್ಚ ನೀರಿನ ಅಭಾವ, ರಸ್ತೆ, ಆಸ್ಪತ್ರೆ, ಶಾಲೆಗಳ ತೀವ್ರ ಕೊರತೆ ಮುಂತಾದ ನೂರೊಂದು ಸಾಮಾಜಿಕ ಸಮಸ್ಯೆಗಳಿಂದ ಬಡ ದೇಶಗಳ ಜನ ಬಳಲುತ್ತಿದ್ದರೆ ತನ್ನ ತಿಜೋರಿಯನ್ನು ಪಾಪದ ಹಣದಿಂದ ಅಲಂಕರಿಸುವುದು ಬೇಡ. 

 ಬಡ ರಾಷ್ಟ್ರಗಳು ತಮ್ಮ ದೇಶದಿಂದ ಹೊರ ಹೋದ ಹಣಕ್ಕಾಗಿ ಸ್ವಿಸ್ ದೇಶವನ್ನು ಸಂಪರ್ಕಿಸಿದಾಗ ಕಾನೂನು ತೊಡಕುಗಳನ್ನು ಕಾರಣವಾಗಿಸಿ ಅವರಿಗೆ ನ್ಯಾಯವಾಗಿ ಸಲ್ಲಬೇಕಾದ ಹಣವನ್ನು ಕೊಡದೆ ವರ್ಷಗಟ್ಟಲೆ ಕಾಯಿಸಿದರು. ಈ ಅವಧಿಯಲ್ಲಿ ಈ ಬಡ ರಾಷ್ಟ್ರಗಳಲ್ಲಿ ಹೊಟ್ಟೆಗಿಲ್ಲದೆ, ಔಷಧಿ ಇಲ್ಲದೆ ಸತ್ತ ಜನರ ಸಂಖ್ಯೆ ಅದೆಷ್ಟೋ ದೇವರೇ ಬಲ್ಲ. ತನ್ನ ಪ್ರಜೆಗಳು ಕೊಬ್ಬು ತುಂಬಿದ ಸ್ಟೇಕ್ ತಿನ್ನುತ್ತಾ ವೈನು, ಬೀರು ಸವಿಯುತ್ತಿದ್ದರೆ ಬಡ ದೇಶಗಳ ಬಹುಸಂಖ್ಯಾತ ಜನ ಒಪ್ಪೊತ್ತಿನ ಅನ್ನವಿಲ್ಲದೆ ನರಳುವ ದೃಶ್ಯ ವಿಶ್ವದ ಅಸಹಾಯಕತೆಯನ್ನು ಎತ್ತಿ ತೋರಿಸುತ್ತದೆ. ನಮ್ಮ ದೇಶದಿಂದ ಸ್ವಿಸ್ ದೇಶಕ್ಕೆ ವಲಸೆ ಹೋದ ಅಗಾಧ ಸಂಪತ್ತು ಮರಳಿ ಬಂದರೆ ಕೆಳಗೆ ತೋರಿಸಿದ ಮಕ್ಕಳ ಅಸಹಾಯಕ ಪರಿಸ್ಥಿತಿ ಸುಧಾರಿಸಲು ನೆರವಾಗಬಹುದು.

ಆರು ವರ್ಷ ಪ್ರಾಯದ ವಿಶಾಲ್ ಒಂದು ಕಪ್ ಚಹಾ ಮತ್ತು ಎರಡು ತುಂಡು ಬಿಸ್ಕಿಟ್ ಒಂದಿಗೆ ತನ್ನ ದಿನವನ್ನು ಆರಂಭಿಸುತ್ತಾನೆ. ಬಡ ಮಕ್ಕಳಿಗೆ ಪುಕ್ಕಟೆಯಾಗಿ ಹಂಚುವ ಚಿತ್ರಾನ್ನ ಅವನ ಮಧ್ಯಾಹ್ನದ ಊಟ. ಅದರಲ್ಲಿ ಅರ್ಧ ತಿಂದು ಮತ್ತೊಂದಿಷ್ಟನ್ನು ತೆಗೆದಿಡುತ್ತಾನೆ ಹಸಿದಾಗ ತಿನ್ನಲು. ರಾತ್ರಿ ಹಸಿದಾಗ ಐದು ರೂಪಾಯಿಯ ಕುರ್ಕುರೆ ಕೊಡಿಸುತ್ತಾಳೆ ಅವನ ತಾಯಿ. ಈ ತಿನಿಸುಗಳೇ ಅವನ ಒಂದು ದಿನದ ಆಹಾರ. ಇಷ್ಟು ತಿಂದಾಗ ವಿಶಾಲನಿಗೆ ಸಿಗುವ ಕ್ಯಾಲೋರಿಗಳು ೮೫೬.

ಎರಡು ವರ್ಷದ ಸುರ್ಜ ಕೊಲ್ಕತ್ತಾದ ಕಲ್ಯಾಣಿ ರೈಲ್ವೆ ಸ್ಟೇಶನ್ ನ ಪ್ಲಾಟ್ಫಾರ್ಮ್ ನಾಲ್ಕರಲ್ಲಿ ಮನೆ ಮಾಡಿ ಕೊಂಡಿದ್ದಾನೆ. ಬೆಳಗ್ಗಿನ ತಿಂಡಿಗೆ ಅರ್ಧ ಪೂರಿ. ಮಧ್ಯಾಹ್ನ, ಎರಡು ಹಿಡಿ ಅನ್ನ ಮತ್ತು ಬೇಳೆ ಸಾರು. ರಾತ್ರಿ ಮತ್ತೆರಡು ಹಿಡಿ ಅನ್ನ, ಸಾರು ಅಥವಾ ಒಂದು ರೊಟ್ಟಿ. ಸುರ್ಜ, ಐದು ವರ್ಷಗಳ ತನ್ನ ಅಕ್ಕ, ಮತ್ತು ಕುಷ್ಠ ರೋಗಿ ತಂದೆಯೊಂದಿಗೆ ವಾಸಿಸುತ್ತಾನೆ. ಬೇಡಿ ತಿನ್ನುವುದು ಅವರ ಬದುಕು. ದಿನಕ್ಕೆ ೨೦ – ೨೫ ರೂಪಾಯಿ ದುಡಿಯುತ್ತಾರೆ. ರೈಲು ಪ್ರಯಾಣಿಕರು ತಿಂದು ಉಳಿದುದನ್ನು ಇವರು ತಿಂದು ಬದುಕುತ್ತಾರೆ. ಇವರಿಗೆ ದೊರಕುವ ಕ್ಯಾಲೋರಿ ಹೆಚ್ಚು ಕಡಿಮೆ ವಿಶಾಲನಷ್ಟೇ. ನಮ್ಮ ಹೊಟ್ಟೆ ಬಡಿದ ಪಾಶ್ಚಾತ್ಯ ದೇಶಗಳ ಮಕ್ಕಳು ತಿನ್ನುವ ತಿನಿಸು ಮತ್ತು ಅವರಿಗೆ ಲಭ್ಯವಾಗುವ ಕ್ಯಾಲೋರಿ ಬಗ್ಗೆ ಬರೆಯಬೇಕೆ? ಬೇಡ ಬಿಡಿ, ಅವರಾದರೂ ತಿಂದುಂಡು ಚೆನ್ನಾಗಿರಲಿ.

child, Relief and You (CRY) ನಡೆಸಿದ ಸಮೀಕ್ಷೆಯ ವೇಳೆ ಸಿಕ್ಕಿದ ಚಿತ್ರಣ ಮೇಲಿನದು. CRY ಸಂಸ್ಥೆಗೆ ಸ್ವಿಸ್ ಸೇರಿ ಬಿಳಿಯ ದೇಶಗಳು ಧಾರಾಳವಾಗಿ ದಾನ ಕೊಡುತ್ತಿರಬಹುದು. ನಮ್ಮ ನಾಯಕರುಗಳು ಪೇರಿಸಿಟ್ಟ ಧನದ ಮೇಲೆ ಅವರಿಗೆ ಸಿಗುವ ಬಡ್ಡಿಯ ಒಂದಿಷ್ಟು ಅಂಶ. LET POOR KIDS FROM THIRD WORLD COUNTRIES SURVIVE ಅಂತ ಕನಿಕರದಿಂದ ದಾನ ಮಾಡುತ್ತಾರೆ ಬಿಳಿಯರು.   

“ವಿಶ್ವ ಹಸಿವಿನ ಸೂಚಿ” (world hunger index)  ಪ್ರಕಾರ ವಿಶ್ವದ ಪೌಷ್ಟಿಕಾಂಶ ಕೊರತೆಯಿರುವ ಶೇಕಡಾ ೪೨ ರಷ್ಟಿರುವ ಮಕ್ಕಳಲ್ಲಿ ಸುಮಾರು ಅರ್ಧದಷ್ಟು ಮಕ್ಕಳು ಭಾರತದಲ್ಲಿ ಇದ್ದಾರಂತೆ. India shining? ಕ್ಷಮಿಸಿ india starving ಎಂದಿರಬೇಕಿತ್ತು. india shining ಎಂದು ಹೇಳಿ ನಮಗೆ ಗರಿ ಗರಿಯಾದ ಟೋಪಿ ತೊಡಿಸಲು ಬಂದ ನಮ್ಮ ನಾಯಕರಿಗೆ ಹಾಸ್ಯ ಪ್ರಜ್ಞೆ ಇಲ್ಲ ಎಂದು ಹೇಳಿದವರಾರು?

ನನ್ನ ಮನವಿ ಇಷ್ಟೇ. ಸ್ವಿಸ್ ಬ್ಯಾಂಕುಗಳಲ್ಲಿ ಕೊಳೆಯಲು ಹಾಕಿರುವ ಹಣ ನಮ್ಮ ದೇಶಕ್ಕೆ ಹಿಂತಿರುಗಲಿ. ಲೂಟಿ ಮಾಡಿದವರ ಮೇಲೆ ಸೇಡು ಬೇಡ. ಅವು ಆಗುವ ಹೋಗುವ ಕೆಲಸಗಳಲ್ಲ. ಅವರನ್ನು ಕ್ಷಮಿಸೋಣ ಆದರೆ ನಮ್ಮ ಸಂಪತ್ತು ಮಾತ್ರ ರವಾನೆಯಾಗಲಿ ಭಾರತಕ್ಕೆ.

ಪುಟ್ಟ ದೇಶ, ದಿಟ್ಟ ಹೆಜ್ಜೆ

ಟುನೀಸಿಯಾ, ಆಫ್ರಿಕಾ ಖಂಡದ ತುತ್ತ ತುದಿಯಲ್ಲಿ, ಮೆಡಿಟೆರ್ರೆನಿಯನ್ ಸಮುದ್ರದ ತೀರದಲ್ಲಿ ಪ್ರಶಾಂತವಾಗಿ ನಿದ್ರಿಸುವ ಒಂದು ಪುಟ್ಟ ಅರಬ್ ದೇಶ. ಎರಡನೇ ಭಾಷೆ ಫ್ರೆಂಚ್. ಜನಸಂಖ್ಯೆ ಸುಮಾರು ಒಂದು ಕೋಟಿ. ಟುನೀಸಿಯಾದ ಬಗ್ಗೆ ನಾವೇನಾದರೂ ಕೇಳಿದ್ದಿದ್ದರೆ ಅದು ಒಂದು ಪ್ರವಾಸಿ ತಾಣ ಎಂದು ಮಾತ್ರ. ನಮ್ಮ ಗೋವಾ ರೀತಿಯದು.

ದಿನನಿತ್ಯ ದ ಸಾಮಗ್ರಿಗಳ ಬೆಲೆ ವಿಪರೀತ ಏರಿದ್ದು ಮಾತ್ರವಲ್ಲದೆ ನಿರುದ್ಯೋಗ ಸಮಸ್ಯೆಯೂ ಕಿತ್ತು ತಿನ್ನಲು ಆರಂಭಿಸಿದಾಗ ಜನ ಸಿಡಿದೆದ್ದರು ಟುನೀಸಿಯಾದಲ್ಲಿ. ಓರ್ವ ಯುವಕ ಆತ್ಮಹತ್ಯೆ ಮಾಡಿ ಕೊಳ್ಳುವುದರೊಂದಿಗೆ ಪರಿಸ್ಥಿತಿ ಹದಗೆಟ್ಟಿತು. ಅಧ್ಯಕ್ಷ ಜೈನುಲ್ ಆಬಿದೀನ್ ಬಿನ್ ಅಲಿ ತಾನು ಆಳುವ ಜನರ ನಾಡಿಮಿಡಿತ ಅರಿಯಲು ವಿಫಲನಾದ. ಪ್ರತಿಭಟಿಸುತ್ತಿದ್ದ ಜನರನ್ನು ಬಲಪ್ರಯೋಗದ ಮೂಲಕ ಅಡಗಿಸಲು ಯತ್ನಿಸಿದ. ಹತ್ತಾರು ಜನರು ಸತ್ತರು. ಜನ ಜಗ್ಗಲಿಲ್ಲ. ಬೀದಿಗಳಿಂದ ಮನೆಗೆ ಹೋಗಲು ನಿರಾಕರಿಸಿ ಉಗ್ರವಾಗಿ ಪ್ರತಿಭಟಿಸಿದರು. ಭ್ರಷ್ಟ ಲಂಚಗುಳಿ ಅಧ್ಯಕ್ಷನ ಸಂಬಂಧಿಯೊಬ್ಬನನ್ನು ಹಾಡು ಹಗಲೇ ಕೊಲೆ ಮಾಡಿದರು. ಇದನ್ನು ಕಂಡು ಕಂಗಾಲಾದ ಬಿನ್ ಅಲಿ ಕಾಲಿಗೆ ಬುದ್ಧಿ ಹೇಳಿದ. ಫ್ರಾನ್ಸ್ ದೇಶ ಅಭಯ ನೀಡಲು ನಿರಾಕರಿಸಿದಾಗ ಸೌದಿ ಅರೇಬಿಯಾ ಆಶ್ರಯ ನೀಡಿತು. ನೇರವಾಗಿ ಜೆದ್ದಾ ನಗರಕ್ಕೆ ಬಂದ ಬಿನ್ ಅಲಿ. ಉಗಾಂಡಾ ದೇಶದ ಸರ್ವಾಧಿಕಾರಿ ದಿವಂಗತ ಇದಿ ಅಮೀನ್ ಮತ್ತು ಪಾಕಿನ ನವಾಜ್ ಶರೀಫ್ ರಂಥ ಭ್ರಷ್ಟ ಅತಿಥಿ ಗಳಿಗೆ ಆಶ್ರಯ ನೀಡಿದ ಕೆಂಪು ಸಮುದ್ರದ ವಧು, ಜೆಡ್ಡಾ ನಗರ ಬಿನ್ ಅಲಿಯನ್ನೂ ಸ್ವಾಗತಿಸಿತು ತನ್ನ ತೀರಕ್ಕೆ.

ಪ್ರತಿಭಟಿಸುವ ಅಸ್ತ್ರವಾಗಿ ಜೀವವನ್ನು ಕಳೆದು ಕೊಳ್ಳುವುದು ತೀರಾ ಅಪರೂಪ ಮುಸ್ಲಿಂ ಜಗತ್ತಿನಲ್ಲಿ. ಹುಟ್ಟಿಗೆ ಕಾರಣನಾದ ದೇವರೇ ಕಳಿಸಬೇಕು ದೇವದೂತನನ್ನು ಜೀವ ತೆಗೆಯಲು. ಆತ್ಮಹತ್ಯೆ ಮಹಾ ಪಾಪ. ಯಾವುದೇ ಸಮಜಾಯಿಷಿ ಇಲ್ಲ ಜೀವ ಕಳೆದುಕೊಳ್ಳುವ ಕೃತ್ಯಕ್ಕೆ. ಆದರೆ ಮನುಷ್ಯ ಹಸಿದಾಗ, ನಿಸ್ಸಹಾಯಕನಾಗಿ ಗೋಡೆಗೆ ದೂಡಲ್ಪಟ್ಟಾಗ ಧರ್ಮ back seat ತೆಗೆದು ಕೊಳ್ಳುತ್ತದೆ. ಟುನೀಸಿಯಾದಲ್ಲಿ ಆದದ್ದು ಇದೇ. ಬರೀ ಅಧ್ಯಕ್ಷ ಮಾತ್ರ ಭ್ರಷ್ಠನಲ್ಲ. ಈತನ ಮಡದಿ ಸಹ ಮುಂದು ಖಜಾನೆಯ ಲೂಟಿಯಲ್ಲಿ. ಒಂದೂವರೆ ಟನ್ನುಗಳಷ್ಟು ಚಿನ್ನವನ್ನು ತೆಗೆದುಕೊಂಡು ದೇಶ ಬಿಟ್ಟಳು. ಎಲ್ಲಿ ಆಶ್ರಯ ಸಿಕ್ಕಿತು ಎಂದು ಇನ್ನೂ ಗೊತ್ತಿಲ್ಲ. ಜನರ ಹತ್ತಿರ ಕವಡೆಗೆ ಬರ ಬಂದಾಗ ಅಧ್ಯಕ್ಷ, ಅವನ ಪತ್ನಿ, ಅವರಿಬ್ಬರ ಸಂಬಂಧಿಕರು ಐಶಾರಾಮದಿಂದ ಬದುಕುವಾಗ ಸಹಜವಾಗಿಯೇ ಓರ್ವ ನಿಸ್ಸಹಾಯಕ ಯುವಕ ಆತ್ಮಹತ್ಯೆಗೆ ಶರಣಾದ ದಾರಿ ಕಾಣದೆ. ತನ್ನ ಜೀವ ಕಳೆದುಕೊಳ್ಳುವ ಮೂಲಕ ಅರಬ್ ಜಗತ್ತಿನ ಒಂದು ಅಪರೊಪದ ಕ್ರಾಂತಿಗೆ ನಾಂದಿ ಹಾಡಿದ.

೨೩ ವರುಷಗಳ ಕಾಲ ಒಂದೇ ಸಮನೆ ತನ್ನ ದೇಶವವ್ವು ಕೊಳ್ಳೆ ಹೊಡೆದ ಬಿನ್ ಅಲಿ ಪಾಶ್ಚಾತ್ಯ ದೇಶಗಳಿಗೆ ಮಿತ್ರ. ಏಕೆಂದರೆ ಅಲ್ಕೈದಾ ಬಂಟರು ತನ್ನ ದೇಶದಲ್ಲಿ ನೆರೆಯೂರಲು ಈತ ಬಿಡಲಿಲ್ಲ. ಈತ ಬಿಡಲಿಲ್ಲ ಎನ್ನುವುದಕ್ಕಿಂತ ಇಲ್ಲಿನ ಜನ ಶಾಂತಿ ಪ್ರಿಯರು ಎಂದೇ ಹೇಳಬಹುದು. ಬಹುತೇಕ ಅರಬ್ ರಾಷ್ಟ್ರಗಳಲ್ಲಿ ಅಲ್ ಕೈದಾ ದ ಪ್ರಭಾವ ಅಷ್ಟಿಲ್ಲ. ತಮ್ಮ ಆಶಯಗಳಿಗೆ ಅನುಸಾರ ಯಾರಾದರೂ ನಡೆಯುವುದಿದ್ದರೆ ಅಲ್ಲಿ ಪ್ರಜಾಪ್ರಭುತ್ವ, ಸ್ವೇಚ್ಛಾಚಾರ, ಅಭಿವ್ಯಕ್ತಿ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ ಎನ್ನುವ ಮಾರುದ್ದದ ಶಾಪ್ಪಿಂಗ್ ಲಿಸ್ಟ್ ಹಿಡಿದು ಕೊಂಡು ಬರುವುದಿಲ್ಲ ಅಮೇರಿಕಾ ಮತ್ತು ಅದರ ಬಾಲಂಗೋಚಿಗಳು. ಪಶ್ಚಿಮದ ಸಮಯಸಾಧಕತನಕ್ಕೆ ಟುನೀಸಿಯಾ ಸಹ ಹೊರತಾಗಲಿಲ್ಲ. ಈ ತೆರನಾದ ಇಬ್ಬಂದಿಯ ನೀತಿಯ ಪರಿಣಾಮವೇ ೨೩ ವರ್ಷಗಳ ಅವ್ಯಾಹತ ದಬ್ಬಾಳಿಕೆ ಬಿನ್ ಅಲಿಯದು.

ಅರಬ್ ರಾಷ್ಟ್ರಗಳಲ್ಲಿ ಟುನೀಸಿಯಾ ರೀತಿಯ ಕ್ರಾಂತಿಗಳು ಅಪರೂಪ. ಉಣ್ಣಲು, ಉಡಲು, ಸಾಕಷ್ಟಿದ್ದು ಸಾಕಷ್ಟು ಸಂಬಳ ಸಿಗುವ ನೌಕರಿ ಇದ್ದರೆ ಬೇರೇನೂ ಕೇಳದವರು ಅರಬರು. ಅರಬ್ಬರ ಈ ನಡವಳಿಕೆ ನೋಡಿಯೇ ಇಲ್ಲಿ ಸರ್ವಾಧಿಕಾರಿಗಳದು ದರ್ಬಾರು. ಊಳಿಗಮಾನ್ಯ ಪದ್ಧತಿಗೆ ಉದಾಹರಣೆಗಾಗಿ ವಿಶ್ವ ಎಲ್ಲೂ ಪರದಾಡ ಬೇಕಿಲ್ಲ. ಕೊಲ್ಲಿ ಕಡೆ ಒಂದು ಪಿಕ್ ನಿಕ್ ಇಟ್ಟುಕೊಂಡರೆ ಸಾಕು. ಈ ಪ್ರಾಂತ್ಯದಲ್ಲಿ ಪ್ರಜಾಪ್ರಭುತ್ವ ಮೊಳಕೆ ಒಡೆಯುವುದು ಕಷ್ಟದ ಕೆಲಸವೇ.

ಮರಳುಗಾಡಿನಲ್ಲಿ ಹಸಿರು ಮೊಳಕೆಯೊಡೆಯಲು ಸಾಧ್ಯವೇ? ಇಲ್ಲಿನ ನಿಸರ್ಗ, ವಾತಾವರಣ, ಜನರ ನಡಾವಳಿ ಎಲ್ಲವೂ ಪ್ರಜಾಪ್ರಭುತ್ವಕ್ಕೆ ವ್ಯತಿರಿಕ್ತ. ಹಾಗಾಗಿ ನಿರಂಕುಶಾಧಿಕಾರಿಗಳ ದೊಡ್ಡ ದಂಡನ್ನೇ ಕಾಣಬಹುದು ಇಲ್ಲಿ. ಆಫ್ರಿಕಾದಲ್ಲೂ, ಏಷ್ಯಾದಲ್ಲೂ ಇರುವ ಸರ್ವಾಧಿಕಾರಿಗಳಿಗೆ ಹೋಲಿಸಿದರೆ ಇಲ್ಲಿನವರು ನಿರ್ದಯಿಗಳಲ್ಲ. ತಾವು ಹೊಡೆದ ಲೂಟಿಯಲ್ಲಿ ಜನರಿಗೂ ಒಂದಿಷ್ಟನ್ನು ಕೊಡುತ್ತಾರೆ. ಕಾರು ಕೊಳ್ಳಲು ಸಾಲ, ಉನ್ನತ ವ್ಯಾಸಂಗಕ್ಕಾಗಿ ಸಾಲ, ಮನೆ ಕಟ್ಟಲು ಸಾಲ, ಕೊನೆಗೆ ಮದುವೆಯಾಗಲೂ ಕೂಡ ಸಾಲ. ಆಹಾ, ಇಷ್ಟೆಲ್ಲಾ ಸವಲತ್ತಿರುವಾಗ ಗೋಡೆ ತುಂಬಾ ಧಿಕ್ಕಾರ ಗೀಚಿ, ಬೀದಿ ಅಲೆಯುತ್ತಾ ಮೈಕ್ ಹಿಡಿದು ಜಯಕಾರ ಕೂಗಿ ಪ್ರಜಾಪ್ರಭುತ್ವವನ್ನು ಮೆರೆಯುವುದಾದರೂ ಏತಕ್ಕೆ ಹೇಳಿ?

ತಮ್ಮ ಪಾಡಿಗೆ ತಾವು ಲೂಟಿ ಮಾಡುತ್ತಾ, ಒಂದಿಷ್ಟು ಜನಕಲ್ಯಾಣ ಮಾಡಿ ಪಾಪದ ಹೊರೆ ಹಗುರ ಮಾಡಿಕೊಳ್ಳುತ್ತಿದ್ದ ಅರಬ್ ಆಡಳಿತಗಾರರಿಗೆ ಟುನೀಸಿಯಾದ ಬೆಳವಣಿಗೆ ಬೆವರೊಡೆಸಿತು. ಭಯ ಆವರಿಸಿತು. ಅಮ್ಮಾನ್, ಕೈರೋ, ಡಮಾಸ್ಕಸ್, ರಿಯಾದ್ ನಗರಗಳ ಬೀದಿಗಳೂ ಟುನೀಸಿಯಾದ ಬೀದಿಗಳ ಹಾದಿ ಹಿಡಿದರೆ? ಕೂಡಲೇ ಅಗತ್ಯ ವಸ್ತುಗಳ ಬೆಲೆ ತಮಗೆ ತಾವೇ ಇಳಿದವು ಸಿರಿಯಾ ಮತ್ತು ಜೋರ್ಡನ್ ದೇಶಗಳಲ್ಲಿ. ಈ ಎರಡೂ ರಾಷ್ಟ್ರಗಳು ನಿದ್ದೆಯಿಂದ ಎಚ್ಚೆತ್ತು ಕೊಳ್ಳುವ ಪ್ರಯತ್ನ ಮಾಡಿದರೆ ಇವಕ್ಕೆಲ್ಲಾ ಸೊಪ್ಪು ಹಾಕಲಾರೆ ಎನ್ನುವ ಮತ್ತೊಬ್ಬ ಸರ್ವಾಧಿಕಾರಿ ಹೋಸ್ನಿ ಮುಬಾರಕ್. ಈಜಿಪ್ಟ್ ನ ಹೋಸ್ನಿ ಮುಬಾರಕ್ ೩೦ ವರುಷಗಳ ಸುದೀರ್ಘ ಅನುಭವವಿರುವ ಠಕ್ಕ. ಬೇರೆಲ್ಲಾ ಠಕ್ಕರು ಚಾಪೆ ಕೆಳಗೆ ತೂರಿಕೊಂಡರೆ ಈತ ರಂಗೋಲಿ ಕೆಳಗೆ ತೂರಿ ಕೊಳ್ಳುತ್ತಾನೆ. ಆತನಿಗೆ ಅದಕ್ಕೆ ಬೇಕಾದ ಪರಿಣತಿ ಒದಗಿಸಲು ಶ್ವೇತ ಭವನ ಸಿದ್ಧವಾಗಿದೆ ಕರಾಳ ಟ್ರಿಕ್ಕುಗಳೊಂದಿಗೆ.

ಈಗ ಈ ಕ್ರಾಂತಿಯ ಪರಿಣಾಮ ನಾನಿರುವ ಸೌದಿಯಲ್ಲಿ ಹೇಗೆ ಎಂದು ಊಹಿಸುತ್ತಿದ್ದೀರೋ? ಇಲ್ಲಿನ ದೊರೆ ಅಬ್ದುಲ್ಲಾ ಜನರಿಗೆ ಅಚ್ಚು ಮೆಚ್ಚು. ಜನರಿಗೆ ಬೇಕಾದ ಎಲ್ಲಾ ಸೌಕರ್ಯವನ್ನೂ ಮಾಡಿ ಕೊಡುತ್ತಾ, ಇಸ್ಲಾಮಿನ ಎರಡು ಪವಿತ್ರ ಕ್ಷೇತ್ರಗಳಿಗೆ ಸಾವಿರಾರು ಕೋಟಿ ಡಾಲರುಗಳನ್ನು ಅನುದಾನ ನೀಡುತ್ತಾ ಇರುವ ಈ ದೊರೆ ಜನರ ಕ್ಷೇಮ ವನ್ನು ವೈಯಕ್ತಿಕ ಭೇಟಿ ಮೂಲಕ ನೋಡಿ ಕೊಳ್ಳುತ್ತಾರೆ. ಜನರಿಗೆ ಅನ್ಯಾಯವಾದರೆ ಎಂಥ ಪ್ರಭಾವಶಾಲಿಗಳಾದರೂ ಈ ದೊರೆಯ ನಿಷ್ಟುರ ನ್ಯಾಯದಿಂದ ತಪ್ಪಿಸಿ ಕೊಳ್ಳಲಾರರು. ಕಳೆದ ವರ್ಷ ಜೆಡ್ಡಾ ನಗರದಲ್ಲಿ ಮಳೆಯಿಂದ ಆದ ಅಪಾರ ಅನಾಹುತ ೧೫೯ ಜನರ ಪ್ರಾಣ ತೆಗೆದು ಕೊಂಡಿತ್ತು. ಜನರ ಒತ್ತಾಯದ ಮೇರೆಗೆ ಈ ಅನಾಹುತಕ್ಕೆ ನಗರಸಭೆಯ ಅಧಿಕಾರಿಗಳನ್ನು ನೇರವಾಗಿ ಹೊಣೆಯಾಗಿರಿಸಿ ಅವರುಗಳ ಮೇಲೆ criminal ದಾವೆ ಹೂಡಿ ಜೈಲಿಗೆ ಅಟ್ಟಿದರು ಇಲ್ಲಿನ ದೊರೆ. ಟುನೀಸಿಯಾದ ಕ್ರಾಂತಿ ಸೌದಿ ಬ್ಲಾಗಿಗರೂ ಕುತೂಹಲದಿಂದ ವರದಿ ಮಾಡಿದ್ದಾರೆ ಎಂದು ಅಮೆರಿಕೆಯ npr ರೇಡಿಯೋ ದ ಬಾತ್ಮೀದಾರರು ಹೇಳಿದ್ದಾರೆ.

ಸೌದಿ ಅರೇಬಿಯಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಿದ್ದರೂ ಫೇಸ್ ಬುಕ್, ಟ್ವಿಟ್ಟರ್, ಗಳನ್ನು ಬಹಿಷ್ಕರಿಸಿಲ್ಲ. ಈ ಸಾಮಾಜಿಕ ತಾಣಗಳ ಮೂಲಕ ಜನ ತಮ್ಮ ಅಭಿಪ್ರಾಯಗಳನ್ನು ವ್ಯಕ್ತ ಪಡಿಸುತ್ತಿದ್ದಾರೆ. ಕಳೆದ ದಶಕದಿಂದೀಚೆಗೆ ಇಲ್ಲಿನ ವಾರ್ತಾ ಪತ್ರಿಕೆಗಳೂ ಸಹ ಸಾಕಷ್ಟು ಮುಕ್ತವಾಗಿ ವರದಿ ಮಾಡುತ್ತಿವೆ. ಅಮೆರಿಕೆಯ ಕೆಂಗಣ್ಣಿಗೆ ಗುರಿಯಾದ al-jazeera ಟೀವೀ ಮಾಧ್ಯಮ ಕೂಡಾ ಇಲ್ಲಿ ನೋಡಲು ಲಭ್ಯ. ಅದೇ ರೀತಿ ಸೌದಿ ರಾಜ ಮನೆತನಕ್ಕೆ ವಿರುದ್ಧವಾಗಿ ಬರೆಯುವ ಗಾರ್ಡಿಯನ್, independent ಪತ್ರಿಕೆಗಳು ಇಲ್ಲಿ ಲಭ್ಯ. ವಾಣಿಜ್ಯ, ವ್ಯಾಪಾರ ಸಂಬಂಧಕ್ಕೆ ಅವಶ್ಯವಿರುವ ಪ್ರಕ್ರಿಯೆಯಲ್ಲಿ ವಿಶ್ವದಲ್ಲಿ ೧೩ ನೆ ಸ್ಥಾನ ಸೌದ್ ಅರೇಬಿಯಾಕ್ಕೆ. ಮುಕ್ತತೆಗೆ ಆಹ್ವಾನ ನೀಡಿ ಸಾಮಾಜಿಕ ಅನಿಷ್ಟಗಳನ್ನು ತನ್ನ ಮಡಿಲಿಗಿರಿಸಿ ಕೊಂಡಿರುವ ಸಂಯುಕ್ತ ಅರಬ್ ಸಂಸ್ಥಾನಗಳು (UAE) ಮತ್ತು ಬಹರೇನ್ ದೇಶಗಳು ಸೌದಿಗಿಂತ ತುಂಬಾ ಹಿಂದಿವೆ ವಾಣಿಜ್ಯ ನೀತಿಯಲ್ಲಿ.

ಟುನೀಸಿಯಾ ದೇಶಕ್ಕೆ ಭೇಟಿ ಕೊಟ್ಟ ಯಾರೇ ಆದರೂ ಹೇಳುವುದು ಎರಡೇ ಮಾತುಗಳನ್ನು ಸುಂದರ ದೇಶ. ಸ್ನೇಹಜೀವಿ ಜನ. ಪ್ರವಾಸೋಧ್ಯಮದ ಮೂಲಕ ದೊಡ್ಡ ರೀತಿಯಲ್ಲಿ ವಿದೇಶೀ ವಿನಿಮಯ ಗಳಿಸುತ್ತಾ, ತನ್ನ ರಮಣೀಯ ಆಲಿವ್ (olive) ಬಯಲುಗಳನ್ನೂ, ಸುಂದರ ತೀರ ಪ್ರದೇಶವನ್ನೂ ಜನರಿಗೆ ತೋರಿಸಿ ತನ್ನ ಹೊಟ್ಟೆ ಹೊರೆದುಕೊಳ್ಳುತ್ತಿದ್ದ ಪುಟ್ಟ ಟುನೀಸಿಯಾ ದೇಶ ಇಟ್ಟಿರುವ ದಿಟ್ಟ ಹೆಜ್ಜೆ ಅದಕ್ಕೆ ಮುಳುವಾಗದೆ ಇರಲಿ ಎಂದು ಹಾರೈಸೋಣ.

ಹೀಗೇ ಸುಮ್ಮನೆ: ಇಸ್ಲಾಮಿನ flexibility ಯ ದ್ಯೋತಕವಾಗಿ ಟುನೀಸಿಯಾ ದಲ್ಲಿ ಬಹುಪತ್ನಿತ್ವ ನಿಷಿದ್ಧ. ಇದು ಶರಿಯತ್ ಗೆ ವಿರುದ್ಧ ಎಂದು ಇಲ್ಲಿನ ಮುಲಾಗಳು ಇದುವರೆಗೂ ಅರಚಿಲ್ಲ.