ಪಾಕಿಸ್ತಾನದ yorker

ಪಾಕಿಸ್ತಾನದ ವಿದೇಶಾಂಗ ಸಚಿವೆ ಮಾತುಕತೆಗೆಂದು  ಭಾರತಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕಡೆಯಿಂದ ಒಂದು ‘ಯಾರ್ಕರ್’ ನಮ್ಮ ಕಾಲ ಬುಡಕ್ಕೆ ಬಂದು ಬಿದ್ದಿದೆ. ಭಾರತದ ವಿದೇಶಾಂಗ ಸಚಿವ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಮುತ್ಸದ್ದಿಯಾಗಿದ್ದು ಪಾಕ್ ನ ಹೊಸ ವಿದೇಶಾಂಗ ಸಚಿವೆ ಅವರ ಮುಂದೆ ಏನೂ ಅಲ್ಲ ಅನುಭವದಲ್ಲಿ. ಹೀಗೆಂದು ಹೇಳಿದ್ದು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ. ಈ ಅಪರೂಪದ ಹೊಗಳಿಕೆಯ ಮಾತುಗಳು ಪಾಕಿಸ್ತಾನದ ಜಮೀಯತ್ ಉಲೇಮಾ ಪಕ್ಷದ ಫಜ್ಲುರ್ ರಹಮಾನ್ ಬಾಯಿಂದ ಬಿದ್ದಿದ್ದು. ಭಾರತದ ಕೃಷ್ಣ, ಪಾಕ್ ನ ನೂತನ ವಿದೇಶಾಂಗ ಸಚಿವೆ ‘ಹೀನಾ ಖಾರ್’ ರನ್ನು outsmart ಮಾಡುವರು ಎನ್ನುವ ಮಾತಿನ ಹಿಂದೆ ಮಾತುಕತೆಗಳ ಮುನ್ನವೇ ನಮ್ಮನ್ನು outsmart ಮಾಡೋ ಹುನ್ನಾರವೇ ಪಾಕಿಗಳದು? ಪಾಕಿಸ್ತಾನವನ್ನು ನಂಬಿ ಕೆಟ್ಟವರ “ಕ್ಯೂ” ನಮ್ಮ ಪಡಿತರ ಅಂಗಡಿಯ ಮುಂದೆ ಸಕ್ಕರೆಗಾಗಿ ಕಾದು ನಿಲ್ಲುವವರಿಗಿಂತಲೂ ದೊಡ್ಡದು. ಹಾಗಾಗಿ ಪ್ರಶಂಸೆಯ ಮಾತುಗಳೂ ಸಹ ‘ಸ್ಕ್ಯಾನರ್’  ದಾಟಿಯೇ ಹೋಗಬೇಕು. ಇಲ್ಲದಿದ್ದರೆ ಚಳ್ಳೆ ಹಣ್ಣಿನ ಆತಿಥ್ಯ ನಮ್ಮದಾಗುತ್ತದೆ.   

 ಹೀನಾ ರಬ್ಬಾನಿ ಖಾರ್. ಆಧುನಿಕ ಶಿಕ್ಷಣ ಪಡೆದ, ಈ ಮಹಿಳೆ ಪಾಕ್ ರಾಜಕೀಯ ಕ್ಷೇತ್ರ ಪ್ರವೇಶ ಪಡೆದಿದ್ದು ತನ್ನ ತಂದೆಯ ಹೆಸರಿನ ಕಾರಣ. ಸಾಮಾನ್ಯವಾಗಿ ಮಹಿಳೆಯರು ರಾಜಕೀಯಕ್ಕೆ ಪುರುಷರ ನೆರಳಿನಿಂದಲೇ ಬರುವರು ಎನ್ನುವ ಮಾತು ಕೇಳಿ ಬಂದರೂ ಸಾಕಷ್ಟು ಮಹಿಳೆಯರು ಸ್ವ ಸಾಮರ್ಥ್ಯದಿಂದ ಅಧಿಕಾರದ ಚುಕ್ಕಾಣಿ ಹಿಡಿದ್ದಾರೆ. ಬ್ರಿಟನ್ ದೇಶದ ಮಾರ್ಗರೆಟ್ ಥ್ಯಾಚರ್, ತುರ್ಕಿ ದೇಶದ ಮಾಜಿ ಪ್ರಧಾನಿ ತಾಂಸು ಚಿಲ್ಲರ್, ನಮ್ಮ ಮಮತಾ ಬ್ಯಾನರ್ಜೀ ಮುಂತಾದವರು ಸ್ವ ಸಾಮರ್ಥ್ಯದಿಂದ ಜನಬೆಂಬಲ ಪಡೆದು ಕೊಂಡವರು. ಪಾಕಿಸ್ತಾನದ  ಸಂಸತ್ ಸದಸ್ಯರಾಗ ಬೇಕೆಂದರೆ ಪದವೀಧರರಾಗಿರಬೇಕು ಎನ್ನುವ ನಿಯಮವಿದೆ. ಈ ನಿಯಮದ ಕಾರಣ ಪದವೀಧರರಲ್ಲದ ರಾಜಕಾರಣಿಗಳು ತಮ್ಮ ಮಕ್ಕಳನ್ನು ಚುನಾವಣೆಯಲ್ಲಿ ಸ್ಪರ್ದಿಸಲು ಉತ್ತೇಜಿಸುತ್ತಾರೆ. ಹೀಗೆ ಮತ್ತೆ ಇನ್ನಿತರ ರೀತಿಯಲ್ಲಿ ತಮ್ಮ ತಂದೆಯರ ಪ್ರಭಾವ ಬಳಸಿ ರಾಜಕಾರಣ ಪ್ರವೇಶಿಸುವವರು ಹೆಚ್ಚು. ಈ ವ್ಯವಸ್ಥೆಯ ಮುಖಾಂತರ ಹೀನಾ ರಾಜಕಾರಣ ಪ್ರವೇಶಿಸಿದ್ದು.

 ವಿದೇಶಾಂಗ ಖಾತೆಯ ವಿಷಯದಲ್ಲಿ ಪಾಕ್ ಬಹಳ ನಾಜೂಕು, choosy. ಕಳ್ಳರು ತಮ್ಮ ಕಿತಾಪತಿಯಿಂದ ಬೇಸತ್ತ ವಿಶ್ವಕ್ಕೆ ಅವಶ್ಯವಾಗಿ ಬೇಕಾದ ಆರೈಕೆಯನ್ನು ಆಕರ್ಷಕ ವ್ಯಕ್ತಿತ್ವಗಳ ಕೈಯ್ಯಲ್ಲಿ ಮಾಡಿಸುತ್ತಾರೆ. ಪಾಕಿಸ್ತಾನದ ಅಮೆರಿಕೆಯ ರಾಯಭಾರಿ ಯಾಗಿದ್ದ ಮಲೀಹಾ ಲೋಧಿ ಶ್ವೇತ ಭವನದ ಮೇಲೆ ದೊಡ್ಡ ಪ್ರಭಾವ ಬೀರಿದ್ದರು. ಪಾಕಿಸ್ತಾನ ಕಿತಾಪತಿ ಮಾಡಿದಾಗಲೆಲ್ಲಾ ಇನ್ನೇನು ಅಮೇರಿಕಾ ಆ ದೇಶವನ್ನು ಭಯೋತ್ಪಾದಕ ದೇಶ ಎಂದು ಘೋಷಿಸುತ್ತದೆ ಎನ್ನುತ್ತಿದ್ದಂತೆಯೇ ಈಕೆ ತನ್ನ ಮಾತಿನ, ನಗುವಿನ ಪ್ರಭಾವದಿಂದ ತನ್ನ ದೇಶವನ್ನು ಸಂಕಷ್ಟದಿಂದ ಪಾರು ಮಾಡುತ್ತಿದ್ದಳು.  ಜುಲ್ಫಿಕಾರ್ ಅಲಿ ಭುಟ್ಟೋ ಸಹ ಪಾಕ್ ದೇಶದ ಪ್ರತಿಭಾವಂತ ವಿದೇಶಾಂಗ ಸಚಿವರಾಗಿದ್ದರು. ದೇಶದ ವರ್ಚಸ್ಸು, ಹೆಚ್ಚೆಬೇಕೆಂದರೆ ಸಾಮಾನ್ಯವಾಗಿ ವಿದೇಶಾಂಗ ಸಚಿವರುಗಳು ಮತ್ತು ದೊಡ್ಡ ದೊಡ್ಡ ಪ್ರಭಾವಶಾಲೀ ದೇಶಗಳ ರಾಯಭಾರಿಗಳು ಆಕರ್ಷಕ ವ್ಯಕ್ತಿತ್ವವುಳ್ಳವರಾಗಿರುತ್ತಾರೆ. ಇಂಥ ಹುದ್ದೆಗಳ ಆಯ್ಕೆಯಲ್ಲಿ ಸರಕಾರಗಳು ಜಾಗರೂಕವಾಗಿರುತ್ತವೆ.  

 ಕೇವಲ ೩೪ ವರುಷ ಪ್ರಾಯದ ಪಾಕಿಸ್ತಾನದ ನವ ನಿಯುಕ್ತ ವಿದೇಶಾಂಗ ಸಚಿವೆ ಕಂಡಿದ್ದು ಕಾರ್ಗಿಲ್ ಯುದ್ಧ ಮಾತ್ರ. ೨೦೦೫ ರ ಭೂಕಂಪದ ವೇಳೆ ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದು ಬಿಟ್ಟರೆ ಬೇರೆ ಯಾವುದೇ ದೊಡ್ಡ ವಿದೇಶೀ ಅನುಭವ ಈಕೆಯಲ್ಲಿ ಕಾಣುತ್ತಿಲ್ಲ. ೨೦೦೯ ರಲ್ಲಿ ಪಾಕಿಸ್ತಾನದ ಆಯವ್ಯಯ ಪತ್ರವನ್ನೂ ಈಕೆ ಮಂಡಿಸಿದ್ದರು. ವಯಸ್ಸು ೩೨ ಆದರೂ ಈಗಾಗಲೇ ಎರಡು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದಾರೆ.  

ಹಾಗಾಗಿ ಸಾಕಷ್ಟು ಅನುಭವ ಇಲ್ಲದ ಈ ಮಹಿಳೆ ಭಾರತದಲ್ಲಿ ಬಂದು ಯಾವ ರೀತಿಯ ಪ್ರದರ್ಶನ ನೀಡುವರೋ ಎನ್ನುವುದು ಕುತೂಹಲಕರ ಸಂಗತಿ. ಆಕೆಯ ರಾಜಕೀಯ, ಕೌಟುಂಬಿಕ, ಅನುಭವದ ಹಿನ್ನೆಲೆ ಬಗ್ಗೆ ಹೆಚ್ಚು ತಲೆ ಕೆಡಿಸಿ ಕೊಳ್ಳದೆ ನಾವು ಹೇಳಬೇಕಾದ್ದನ್ನು ಸ್ಪಷ್ಟ ಮಾತುಗಳಲ್ಲಿ ಹೇಳಬೇಕು. ಅತಿಥಿ ಎಳೆ ಪ್ರಾಯದವಳು, ಅನುಭವ ಇಲ್ಲದಾಕೆ, ಅತಿಥಿ ಸತ್ಕಾರ, ಹಾಗೆ ಹೀಗೆ ಎಂದು ಸಲೀಸಾಗಿ ನಡೆಸಿಕೊಳ್ಳದೆ ನಮ್ಮ ಹಿತಾಸಕ್ತಿಯನ್ನು ಎಂದಿಗಿಂತ ಸ್ವಲ್ಪ ಜೋರಾಗಿಯೇ ಕಾಯ್ದು ಕೊಂಡರೆ ನಮಗೇ ಹಿತ. ಅಷ್ಟು ಮಾತ್ರ ಅಲ್ಲ, ಇಲ್ಲೊಂದು ‘caveat emptor’ ಸಹ ಇದೆ. ಪಾಕ್ ನ ಈ ವಿದೇಶಾಂಗ ಸಚಿವೆ ಪದವಿ ಪಡೆದಿದ್ದು ಹೋಟೆಲ್ ಮ್ಯಾನೇಜ್ಮೆಂಟ್ನಲ್ಲಿ, ಅದೂ ಅಮೆರಿಕೆಯ ವಿಶ್ವ ವಿದ್ಯಾಲಯದಿಂದ. deadly double. ಈ ಪದವಿ ಪಡೆದವರು ಯಾವಾಗಲೂ ಮುಗುಳ್ನಗುವನ್ನೇ ಧರಿಸಿರುತ್ತಾರೆ, ಒಳ್ಳೆಯ, ಸಿಹಿಯಾದ, ಸತ್ಕಾರದ ಮಾತುಗಳನ್ನೇ ಆಡುತ್ತಾರೆ ಎಂಥ ಸಂದರ್ಭಗಳಲ್ಲೂ. ಹಳಸಿದ ಪುಳಿಯೋಗರೆ ಯನ್ನು ಇದು ತುಂಬಾ delicious ಎಂದು ನಮ್ಮ ಒಲ್ಲದ ಬಾಯಿಗೆ ತುರುಕುವ ಜನ ಈ hospitality management ಗಳಿಸಿದವರು.

ಒಂದು ಕಡೆ ಹಿಲರಿ ಕ್ಲಿಂಟನ್, ಮತ್ತೊಂದು ಕಡೆ ಹೀನಾ ರಬ್ಬಾನಿ, ಇವರಿಬ್ಬರ ನಡುವೆ ನಮ್ಮ ಮುದ್ದು ಕೃಷ್ಣಾ, ಊಹಿಸಿ ನೋಡಿ. ಅಂತಾರಾಷ್ಟ್ರೀಯ ರಾಜಕಾರಣ ಮುಗುಳ್ನಗುವಿನ, ಫೋಟೋ ಶಾಟ್ ಗಳಿಂದ ತುಂಬಿದ ಪಿಕ್ನಿಕ್ ಅಲ್ಲ. ನಲ್ನುಡಿಗಳ land mine ಗಳು ತುಂಬಿರುತ್ತವೆ ಹಾದಿ ಯುದ್ದಕ್ಕೂ. ಇವನ್ನು  ಗುರುತಿಸಿ ನಮ್ಮ ಹಿತಾಸಕ್ತಿ ಕಾಯ್ದು ಕೊಳ್ಳುವುದು ಒಂದು ದೊಡ್ಡ ಸಾಹಸವೇ ಸರಿ. ಈ ಸಾಹಸದಲ್ಲಿ ನಮ್ಮ ಕೃಷ್ಣ ವಿಜಯಿಯಾಗಲಿ.  

 ಚಿತ್ರ ಕೃಪೆ: ibtimes.com

ನಾವು “ಅಕಶೇರುಕ” ರಾಗಿದ್ದು ಎಂದಿನಿಂದ?

ಪಾಕಿಸ್ತಾನ ಅಮೆರಿಕೆಯ ಒಂದು ಪಪ್ಪೆಟ್. ಇದು ಪಾಕಿಸ್ತಾನದ ಸರಕಾರಕ್ಕಿಂತ ಅಲ್ಲಿನ ಜನಕ್ಕೆ ಚೆನ್ನಾಗಿ ಗೊತ್ತು. ತಮ್ಮ ಸರಕಾರಗಳು ಪ್ರತೀ ನಿರ್ಧಾರಕ್ಕೂ ವಾಷಿಂಗ್ಟನ್ ಮೇಲೆ ಪರಾವಲಂಬಿ ರೀತಿ ಅವಲಂಬಿತ ಎಂದು.  ಪಾಕಿಸ್ತಾನ ಒಂದು miserably failed state, ಪಾಕಿಸ್ತಾನದ ಈ degenaration ನೋಡಿ ಕನಿಕರ ಪಡುತ್ತಿದ್ದ ನಮಗೆ ಒಂದು ವಿಚಿತ್ರ ಆದರೆ  ಆಘಾತಕಾರಿಯಾದ ಬೆಳವಣಿಗೆ ಕಾಣಲು ಸಿಕ್ಕಿದೆ. ಒಂದು ಬೆಳಿಗ್ಗೆ ಅಮೆರಿಕೆಯ ದೂತಾವಾಸದ ಸಿಬ್ಬಂದಿಯೊಬ್ಬ ರಸ್ತೆ ಬದಿಯಲ್ಲಿ ನಿಂತಿದ್ದಾಗ ಬೈಕ್ ಬಂದು ನಿಲ್ಲುತ್ತದೆ, ಗುಂಡಿನ ಚಕಮಕಿ ನಡೆಯುತ್ತದೆ, ಬೈಕ್ ಸವಾರರಲ್ಲಿ ಇಬ್ಬರು ಸಾಯುತ್ತಾರೆ ಅಮೆರಿಕೆಯವನನ್ನು ಪೊಲೀಸರು ಬಂಧಿಸುತ್ತಾರೆ. ಪಾಕ್ ಬೀದಿಗಳಲ್ಲಿ  ಬೈಕ್ ನಲ್ಲಿ ಬರುವುದೂ, ಬಂದ ಕೂಡಲೇ ಗುಂಡಿನ ಕಾಳಗ ನಡೆಯುವುದೂ ಸಾಮಾನ್ಯವೇ. ನಾವು ನಮ್ಮ ಚಿತ್ರಗಳಲ್ಲಿ ಕಾಣುವುದನ್ನು ಅಲ್ಲಿ ನಿಜ ಜೀವನದಲ್ಲಿ ಆಡಿ ತೋರಿಸುತ್ತಾರೆ. ಆದರೆ ವಿಷಯದ ಗಾಂಭೀರ್ಯ ಇರುವುದು ಅಮೆರಿಕೆಯವ ಈ ವಿವಾದದಲ್ಲಿ ಸಿಕ್ಕಿ ಬಿದ್ದಿದ್ದು. ಅದೂ ಸಾಧಾರಣ ಅಮೆರಿಕೆಯ ನಾಗರೀಕನಲ್ಲ. ದೂತಾವಾಸದ ಸಿಬ್ಬಂದಿ. ಅವನಿಗೆ ಇದ್ದೇ ಇರುತ್ತದೆ diplomatic immunity. ತನ್ನ ದೇಶದವರು ಸಿಕ್ಕಿಬಿದ್ದಾಗ ಸಹಜವಾಗಿಯೇ ಅಮೆರಿಕನ್ನರು ಕಿಡಿ ಕಿಡಿ ಯಾಗುತ್ತಾರೆ. ಈ ವಿಷಯದಲ್ಲೂ ಸಹ ಅಸಮಾಧಾನ ಗೊಂಡರು. ಮಾಮೂಲಿ ಪ್ರತಿಭಟನೆ ಕೆಲಸ ಮಾಡದಾದಾಗ ಅಮೆರಿಕೆಯಲ್ಲಿನ ಪಾಕ ರಾಜತಾಂತ್ರಿಕ ನನ್ನು ಕರೆಸಿ ನಮ್ಮ ಪ್ರಜೆಯನ್ನು ವಿಮುಕ್ತಿಗೊಳಿಸದಿದ್ದರೆ ನಿನ್ನನ್ನು ಒದ್ದೋಡಿಸುತ್ತೇವೆ ಎಂದು ಧಮಕಿ ಹಾಕಿದರು. ಧಮಕಿ ಕೇಳಿ ಮರಳಿದ ಆತ ನನಗೆ ಅಂಥ ಎಚ್ಹರಿಕೆಯನ್ನೇನೂ ಅಮೇರಿಕಾ ನೀಡಿಲ್ಲ ಎಂದು ಟ್ವೀಟಿಸಿ ಸುಮ್ಮನಾದ. ಆದರೆ ಅಮೇರಿಕ ನೇರವಾಗಿ ಅಲ್ಲಿನ ಸರಕಾರದ ಮೇಲೆ ಪ್ರಭಾವ ತೋರಿಸಲು ತೊಡಗಿತು. ಅಲ್ಲಿನ ಪೊಲೀಸರು ಮಾತ್ರ ಜಪ್ಪಯ್ಯ ಎನ್ನಲಿಲ್ಲ. ಇವನು ದೂತಾವಾಸದ ಅಧಿಕಾರಿ ಅಲ್ಲ, ಬದಲಿಗೆ ಒಬ್ಬ ಗೂಢಚಾರ ಎಂದು ಕರೆದು ಅವನ ಬಳಿಯಿದ್ದ ಆಧುನಿಕ ಉಪಕರಣಗಳ ಹೆಸರುಗಳನ್ನೂ ಪಟ್ಟಿ ಮಾಡಿ ಬಹಿರಂಗಗೊಳಿಸಿದರು, charge sheet ಹಾಕಿ ಅತ್ತೆ ಮನೆಗೂ ಸಹ ಅಟ್ಟಿದರು. ಈ ಘಟನೆ ನಮ್ಮ ದೇಶದಲ್ಲಿ ನಡೆದಿದ್ದರೆ? ಪಾಕಿಸ್ತಾನದ ಗಾಯಕ ಕೋಟ್ಯಂತರ ರೂಪಾಯಿ ಅನಧಿಕೃತವಾಗಿ  ತಂದ ಎಂದು ಬಂಧಿಸಿದ ಕೂಡಲೇ ಅವನನ್ನು ಬಿಡುಗಡೆ ಗೊಳಿಸಲು ಆದೇಶ.   

ಪ್ರಥಮ ಕೊಲ್ಲಿ ಯುದ್ಧದ ವೇಳೆ ಅಮೆರಿಕೆಯ ಯುದ್ಧ ವಿಮಾನಗಳಿಗೆ ಇಂಧನ ಹಾಕಬಾರದು ಎಂದು ನಿರ್ಣಯಿಸಿದ್ದ ನಮ್ಮ  ಸರಕಾರ ಕೊನೆಗೆ ಸದ್ದಿಲ್ಲದೇ ಇಂಧನ ತುಂಬಿಸಿ ಕೊಟ್ಟಿತು. ಬಿಳಿ ನಗು ನಮ್ಮ ಮೇಲೆ ಚೆನ್ನಾಗಿ ಪ್ರಭಾವ ಬೀರುತ್ತದೆ. ಈ ಪಾಠವನ್ನು ಅಮೆರಿಕನ್ನರಿಗೆ ನೀಡಿದ್ದು ನಮ್ಮನ್ನು ೨೦೦ ವರ್ಷ ಗಳ ಕಾಲ ಆಳಿದ ಬ್ರಿಟಿಷರು. ಇರಾನ್ ನಮ್ಮ ದೇಶದ ಆಪ್ತ ಮಿತ್ರ. ಆದರೆ ಇರಾನ ವಿರುದ್ಧದ ಭದ್ರತಾ ಮಂಡಳಿಯ ನಿರ್ಣಯಕ್ಕೆ ಪರವಾಗಿ ನಾವು ಮತ ಚಲಾಯಿಸಿ ಮಧ್ಯ ಪ್ರಾಚ್ಯದಲ್ಲಿನ ಒಂದು ದೇಶದ ಬೆಂಬಲವನ್ನು ಕಳೆದು ಕೊಂಡೆವು.

ಕೇಂದ್ರ ಸರಕಾರದಲ್ಲಿ ಕೆಲಸ ಮಾಡದ ಅಥವಾ ಮಾಡಲು ಬಾರದ ಒಂದು ಇಲಾಖೆ ಇದ್ದರೆ ಅದೇ ವಿದೇಶಾಂಗ ಇಲಾಖೆ. ವಿದೇಶಾಂಗ ಇಲಾಖೆಯಲ್ಲಿ ಕೆಲಸ ಎಂದರೆ ಗರಿ ಗರಿಯಾದ ಸೂಟು, ಅಥವಾ ರೇಶಿಮೆ ಸೀರೆ ಉಟ್ಟು ದೇಶ ಸುತ್ತುವುದು ಎನ್ನುವ ತಪ್ಪು ಕಲ್ಪನೆ ಮನೆ ಮಾಡಿದೆ. ನೆಹರೂ ಕಾಲಾದ outdated ರಾಜನೀತಿಯ ನಿಯಮಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎನ್ನುವ ಭಾವನೆ ಬೇರೆ. ನಾವು ಯಾರ ಪರವೂ ಅಲ್ಲ, ಎಲ್ಲರ ಸವಾರಿ ನಮ್ಮ ಮೇಲೆ ನಡೆಯಲಿ ಎನ್ನುವ ನಿರ್ಲಿಪ್ತ ನೀತಿಯ ಮೇಲೆ ವಿಪರೀತ ಅವಲಂಬನೆ. ಆ ನೀತಿಗೆ ಒಂದೇ ಒಂದು ಬದಲಾವಣೆಯಂತೂ ಕಾಣಲು ಸಿಕ್ಕಿದೆ. ಅದೇ ಅಮೇರಿಕಾ ಪರ ನೀತಿ. ಹಿಂದೆ ರಷ್ಯಾ ಪರ, ಈಗ ಅಮೇರಿಕಾ ಪರ. ನಮಗೇಕೆ ಸ್ವಂತಿಕೆ ಇಲ್ಲ ಅಥವಾ ಇರಕೂಡದು? ವಿನಾಕಾರಣ ಕಾರ್ಗಿಲ್ ಅನ್ನು ಆಕ್ರಮಿಸಿ ನಮ್ಮ ಸಾವಿರಾರು ಸೈನಿಕರ ಸಾವಿಗೆ ಕಾರಣವಾದ ಪಾಕಿಸ್ತಾನವನ್ನು ಸದೆ ಬಡಿಯುವ ಸುಂದರ, ಬಹುಶಃ ಇನ್ನೆಂದೂ ಬರದ ಅವಕಾಶವನ್ನು ನಾವು ಕಳೆದು ಕೊಂಡೆವು. ಇದಕ್ಕೆ ಕಾರಣ ನಮಗೆ ಅಮೇರಿಕೆಯಿಂದ ಬಂದ ಮನವಿ. ಅವರಿಗೆ ಬೇಕಾದಾಗ ಮನವಿ, ಅಥವಾ ಬೆದರಿಕೆ. ಈ ಎರಡರಲ್ಲಿ ಒಂದನ್ನು ಕೊಟ್ಟು ಅಮೇರಿಕಾ ತನ್ನ ಕೆಲಸವನ್ನೂ ಸಾಧಿಸಿ ಕೊಳ್ಳುತ್ತದೆ.

೨೦೦೧ ಸೆಪ್ಟೆಂಬರ್ ತಿಂಗಳಿನಲ್ಲಿ ಅಮೆರಿಕೆಯ ಮೇಲೆ ನಡೆದ ಧಾಳಿಗೆ ತತ್ತರಿಸಿ ಪ್ರಪಂಚದ ಎಲ್ಲ ದೇಶಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿತು ಅಮೇರಿಕಾ. ಭಯೋತ್ಪಾದಕರು, ಅದಕ್ಕೆ ಧನ ಸಹಾಯ ನೀಡುವವರು ಯಾರದೇ ನೆಲದ ಮೇಲೆ ಇದ್ದರೋ ಅಮೆರಿಕೆಯ ಸುಪರ್ದಿಗೆ ಒಪ್ಪಿಸತಕ್ಕದ್ದು ಎನ್ನುವುದು ಮುಚ್ಚಳಿಕೆ. ವಿಧೇಯರಾಗಿ ಎಲ್ಲಾ ದೇಶಗಳೂ ತಲೆ ಬಾಗಿದವು. ನಮ್ಮ ದೇಶದ ಗಡಿ ನುಗ್ಗಿ ಒಂದು ನಗರವನ್ನು ತನ್ನ ಹಿಂಸೆಯಿಂದ ತತ್ತರಿಸುವಂತೆ ಮಾಡಿದ ಪಾಕ ಬಗ್ಗೆ ಮಾತ್ರ ಬೇರೆಯೇ ತೆರನಾದ ನಿಲುವು. ಉಗ್ರವಾಗಿ ಪ್ರತಿಭಟಿಸಿದಾಗ ಅಲ್ಲಿಂದ ಧಾವಿಸಿ ಬಂದ ವಿದೇಶಾಂಗ ಕಾರ್ಯದರ್ಶಿ ಕ್ಲಿಂಟನ್ ಒಂದ್ರೆಅದು ಮೊಂಬತ್ತಿ ಗಳನ್ನು ಹಚ್ಚಿ, ಎರಡು ನಿಮಿಷ ಮೌನ ಆಚರಿಸಿ ಸಮಾಧಾನ ಮಾಡಿ ಹೋದರು. ಮುಂಬೈ ಮೇಲಿನ ಆಕ್ರಮಣದ ವೇಳೆಯೂ ಭಾರತಕ್ಕೆ ಒಂದು ಸುವರ್ಣಾವಕಾಶ ಇತ್ತು ಪಾಕಿಗೆ ಒಂದು “ಝಟ್ಕಾ” ನೀಡಲು. ಅಲ್ಲೂ ಬಿಳಿ ನಗೆ ನಮ್ಮ priority ಮರೆಯುವಂತೆ ಮಾಡಿತು. ಬಿಳಿ ನಗುವಿನ ಮಾಯೆ ಅಂಥದ್ದು.     

ನಮ್ಮ ರಕ್ಷಣಾ ಸಚಿವ (ಜಾರ್ಜ್ ಫೆರ್ನಾಂಡಿಸ್) ರನ್ನು ಬೆತ್ತಲೆ ಮಾಡಿ ಅಮೆರಿಕೆಯ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ ಅದು ದೊಡ್ಡ ವಿಷಯವಲ್ಲ ನಂಗೆ. ಮೆಚ್ಚುಗೆ, ಅಬ್ಬಾ, ಎಂಥ ಭದ್ರತಾ ವ್ಯವಸ್ಥೆ ಅವರದು. ನಮ್ಮ ರಾಷ್ಟ್ರಪತಿ ಕಲಾಂ ರನ್ನು ವಿಮಾನ ನಿಲ್ದಾಣ ದಲ್ಲಿ ಅನುಚಿತವಾಗಿ ವರ್ತಿಸಿದಾಗಲೂ ನಿರ್ಲಿಪ್ತತೆ. ನಮ್ಮ ವಿದ್ಯಾರ್ಥಿಗಳನ್ನು ಅಲ್ಲಿನ ವಿದ್ಯಾಲಯವೊಂದು ಮೋಸ ಮಾಡಿ ನಂತರ ವಿದ್ಯಾರ್ಥಿಗಳು ಓಡಿ ಹೋಗದಂತೆ electronic tag ಅವರ ಕಾಲಿಗೆ ಕಟ್ಟಿ ಅವರ ಮೇಲೆ ನಿರಂತರ ನಿಗಾ ಇಟ್ಟಾಗಲೂ ನಮಗೆ ಅಮೆರಿಕೆಯ ನಡವಳಿಕೆ ಅಸಹನೀಯವಾಗಿ ತೋರುವುದಿಲ್ಲ. ಇನ್ನು ನಮಗೆ ತಿಳಿಯದ ಇನ್ಯಾವ್ಯಾವ ರೀತಿಯಲ್ಲಿ ನಮ್ಮ ಮೇಲೆ ಸವಾರಿ ಮಾಡುತ್ತಿದೆಯೋ ದೇವರೇ ಬಲ್ಲ. ನಮ್ಮ ಸರಕಾರ ಗಳನ್ನು ನಡೆಸಲು ಮಂತ್ರಿಗಳು, ಕಾರ್ಯದರ್ಶಿಗಳು ಎಲ್ಲಾ ಅರವತ್ತು, ಎಪ್ಪತ್ತು ವಯಸ್ಸು ದಾಟಲೇ ಬೇಕು. ಒಂದೆರಡು ಅಪವಾದಗಳನ್ನು ಬಿಟ್ಟರೆ ವಯೋವೃದ್ಧರ ಕಾರುಬಾರು. ಅವರಿಗೆ ರೋಷ ಎಲ್ಲಿಂದ ತಾನೇ ಬರಬೇಕು.   

ಈಗಿನ ವಿಶ್ವ bi-polar ಆಗಬೇಕಿಲ್ಲ. ಪ್ರಪಂಚದ ತುಂಬಾ ದೊಡ್ಡದು. ಹಳೇ ಕಾಲದ ರೀತಿಯ ರಾಜಕಾರಣವನ್ನು ಅಲ್ಲ ನಾವು ಕಾಣುತ್ತಿರುವುದು. ಪಕ್ಕದ ಚೀನಾ ಅತ್ಯಾಧುನಿಕ ಆಯುಧಗಳನ್ನು ಶೇಖರಿಸುತ್ತಿದೆ ಎಂದು ನಮ್ಮ ಗೃಹ ಮಂತ್ರಿ ಕಳವಳ ವ್ಯಕ್ತ ಪಡಿಸಿದರು. ಅವರ ಮನೆಯೊಳಗೇ ಕೂತು ಅವರೇನಾದರೂ ಮಾಡಿಕೊಳ್ಳಲಿ. ನಮಗೇಕೆ ಅವರ ಉಸಾಬರಿ? 3G ಸ್ಕ್ಯಾಮು ಮತ್ತು ಸ್ವಿಸ್ ಮತ್ತು ಇತರೆ ಬ್ಯಾಂಕುಗಳಲ್ಲಿ ನಮ್ಮ ಜನ ಹುಗಿದಿಟ್ಟಿರುವ ಸಂಪತ್ತನ್ನು ಉಪಯೋಗಿಸಿ ನಮ್ಮ ಸೈನ್ಯವನ್ನೂ ಬಲ ಗೊಳಿಸಲಿ. ಭಾರತದ ನೇತೃತ್ವದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಧ್ರುವೀಕರಣ ನಡೆಯಲಿ. ನಮ್ಮೊಂದಿಗೆ ಹೆಜ್ಜೆ ಹಾಕಲು ಲ್ಯಾಟಿನ್ ಅಮೆರಿಕೆಯಲ್ಲೂ, ಮಧ್ಯ ಪ್ರಾಚ್ಯದೇಶ ಗಳಲ್ಲೂ, ಆಫ್ಫ್ರಿಕಾ ಖಂಡದಲ್ಲೂ ದೇಶಗಳಿವೆ.

ಬರದಿರಿ ನಮ್ಮ ದೇಶಕ್ಕೆ

ಒಂದು ಕಡೆ ವಿಶ್ವ ನಮ್ಮ ಪ್ರಗತಿಯ ಬಗ್ಗೆ ಮೆಚ್ಚುಗೆ ತೋರಿದರೆ ಮತ್ತೊಂದೆಡೆ ನಮ್ಮ ಅಧಿಕಾರಿ, ರಾಜ ಕಾರಣಿಗಳಿಗೆ ತಮ್ಮ ದೇಶಗಳಿಗೆ ಬರದಂತೆ ವಿಸಾ ನೀಡದೆ ಅಪಮಾನ ಮಾಡುತ್ತಿದೆ. ವಿಶ್ವ ರಾಜಕಾರಣದಲ್ಲಿ ನಮ್ಮದೇ ಆದ ಛಾಪು ಮೂಡಿಸಲು ಯತ್ನಿಸುತ್ತಿರುವ ನಮಗೆ ವಿವಿಧೆಡೆಗಳಿಂದ ಊಹಿಸಲಾಗದ ತೊಡಕುಗಳು ಎದುರಾಗುತ್ತಿವೆ. ನಮ್ಮ ಮೇಲೆ ಹಗೆ ಸಾಧಿಸುವುದೇ ತಮ್ಮ ಕಸುಬು ಎಂದುಕೊಂಡಿರುವ ನೆರೆಯ ದೇಶಕ್ಕೆ ಅದರ ಎಲ್ಲಾ ರೀತಿಯ ಹುನ್ನಾರಗಳ ಅರಿವಿದ್ದೂ ಪಾಶ್ಚಾತ್ಯ ರಾಷ್ಟ್ರಗಳು ತಮ್ಮದೃಷ್ಟಿಯನ್ನು ಮತ್ತೆಲ್ಲೋ ಬೀರಿ ಪರೋಕ್ಷ ಬೆಂಬಲವನ್ನು ನೀಡುತ್ತಿವೆ. ಅವರ ಪ್ರಕಾರ ಪಾಕ್ ನಿಜವಾಗಿಯೂ “ಪಾಕ್” (ಶುದ್ಧ). ನಮ್ಮ ವಿದೇಶಾಂಗ ಇಲಾಖೆಯನ್ನು ನಿರ್ವಹಿಸುತ್ತಿರುವವರಿಗೆ ತಮ್ಮ ಸೂಟು, ಗರಿಗರಿಯಾದ ರೇಷ್ಮೆ ಸೀರೆ ಪ್ರದರ್ಶಿಸುವುದೇ ತಮ್ಮ ಪ್ರತಿಭೆ ಎಂದು ಬಗೆದು ನಡೆಯುತ್ತಿರುವುದು ಖೇದಕರ.

ಉತ್ತರ ಅಮೇರಿಕಾ ಖಂಡದ ಕೆನಡಾ ದೇಶ ಅಂತರ ರಾಷ್ಟ್ರೀಯ ರಾಜಕಾರಣದಲ್ಲಿ ಅಷ್ಟೇನೂ ದೊಡ್ಡ ಪಾತ್ರ ವಹಿಸದ ದೇಶ. ಈ ದೇಶಕ್ಕೆ ಹೋಗಲು ಗಡಿ ಭದ್ರತಾ ಪಡೆಗೆ ಸೇರಿದ ನಿವೃತ್ತ ಪೇದೆ ವಿಸಾ ಕೇಳಿದಾಗ ಸಿಕ್ಕ ಉತ್ತರ  “ಕುಪ್ರಸಿದ್ಧ ಹಿಂಸಾತ್ಮಕ ಪಡೆ” (notoriously violent force) ಗೆ ಸೇರಿದವರಿಗೆ ಕೆನಡಾ ಒಂದು ಕನಸು ಎಂದು. ನಮ್ಮ ಅರೆ ಸೈನಿಕ ಪದೆಯನ್ನು “ಕುಪ್ರಸಿದ್ಧ” ಎನ್ನುವ ಮಟ್ಟಿಗೆ ಬೆಳೆಯಿತು ದಾರ್ಷ್ಟ್ಯತನ ಈ ಸದಾ ಮಗುಮ್ಮಾಗಿ ಇರುವ ದೇಶಕ್ಕೆ.  ಇನ್ನಿತರ ಸೈನಿಕ ಅಧಿಕಾರಿಗಳಿಗೂ ಇದೇ ರೀತಿ ಒಂದಲ್ಲ ಒಂದು ರೀತಿಯ “ನೀವು ನಮ್ಮ ದೇಶಕ್ಕೆ ಬರಲು ಅರ್ಹರಲ್ಲ” ಎಂದು ಹಣೆ ಪಟ್ಟಿ. ಈಗ ಒಂದು ಪ್ರಶ್ನೆ. ಪಕ್ಕದ ಪಾಕಿಸ್ತಾನದ ಅಧಿಕಾರಿಗಳಿಗೂ ಇದೇ ರೀತಿಯ ಉಪಚಾರ ಸಿಕ್ಕಿದೆಯೇ? ಸಿಕ್ಕಿರಲಿಕ್ಕಿಲ್ಲ. ಏಕೆಂದರೆ ಅಲ್ಲಿನ ಅಧಿಕಾರಿ, ರಾಜಕಾರಣಿಗಳು ಸಮಯ ಸಾಧಕರು, ಅವರಿಗೆ ರೊಟ್ಟಿಯ ಯಾವ ಮಗ್ಗುಲಿಗೆ ಬೆಣ್ಣೆ ತಗುಲಿದೆ ಎಂದು ಚೆನ್ನಾಗಿ ಗೊತ್ತು, ಅದರ ಪ್ರಕಾರವೇ ನಡೆದುಕೊಂಡು ತಮ್ಮ ಕಾರ್ಯ ಸಾಧಿಸಿ ಕೊಳ್ಳುತ್ತಾರೆ. ನಾವಾದರೋ, ಬೆಳ್ಳಗಿರುವುದೆಲ್ಲಾ ಹಾಲು ಎನ್ನುವ ಸಮೂಹ. ಅಷ್ಟು ಮಾತ್ರವಲ್ಲ, ಬಿಳಿಯರ ಯುದ್ಧವನ್ನು ಪಾಕಿ ಸೈನಿಕರು ಮಾಡುತ್ತಿದ್ದಾರೆ ಎನ್ನುವ ಕಾರಣಕ್ಕೂ ಅವರ ತಂಟೆಗೆ ಯಾರೂ ಹೋಗುವುದಿಲ್ಲ.  

ಇಂಥ ಕಸಿವಿಸಿಯುಂಟು ಮಾಡುವ ಘಟನೆಗಳಿಂದ ನಮಗೆ ಮುಕ್ತಿ ಕೊಡಿಸಲು ಚಾಣಕ್ಯ ಪುರಿಯ ಸಾಹೇಬರುಗಳಿಂದ (ಅಲ್ಲಿ ಈಗ ಮಹಿಳಾ ಸಾಹೇಬರೂ ಇದ್ದಾರೆ) ಸಾಧ್ಯವೇ? ಕೇವಲ ಕೋಪದಿಂದ ಒಂದು ಪತ್ರ ಬರೆದು ಸ್ಪಷ್ಟೀಕರಣ ಕೇಳಿ, ಸಂಜೆಯಾದ ಕೂಡಲೇ ಇದೇ ಬಿಳಿಯರ ಜೊತೆ ಸೇರಿಕೊಂಡು ಪಂಚತಾರಾ ಹೋಟೆಲುಗಳಲ್ಲಿ ಮಜಾ ಉಡಾಯಿಸುವವರಿಂದ ದೇಶ ತನಗೆ ಸಲ್ಲಬೇಕಾದ ಮಾನವನ್ನು ನಿರೀಕ್ಷಿಸ ಬಹುದೇ?

ಈ ತೆರನಾದ ಘಟನೆಗಳಿಗೆ ಬಿಳಿಯರ ದೃಷ್ಟಿದೋಷ ಕಾರಣವೋ ಅಥವಾ ನಮ್ಮಲ್ಲೇ ಏನಾದರೂ ನಮಗೇ ಕಾಣದ ಐಬಿದೆಯೋ ತಿಳಿಯದು. ಹೌದು ಕೆಲವೊಮ್ಮೆ ಪ್ರಮಾದಗಳು ಸಂಭವಿಸಿರಬಹುದು, ಅಂಥ ಘಟನೆಗಳನ್ನ ಆಧಾರವಾಗಿಟ್ಟು ಕೊಂಡು ನಮ್ಮನ್ನು ಈ ರೀತಿ ಹೀನಾಯವಾಗಿ ನಡೆಸಿಕೊಂಡರೆ ಅದಕ್ಕೆ ನಮ್ಮ ಉತ್ತರ ಹೇಗಿರಬೇಕು? ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು. ಅಲಿಪ್ತ ನೀತಿಯ ಮೇಲೆ ವಿಪರೀತ ಅವಲಂಬನೆ ಮಾಡಿದ್ದರಿಂದ ನಮ್ಮಲ್ಲಿನ ರೋಷ ಮಾಯವಾಗಿ ಎಲ್ಲವನ್ನೂ ಸೈರಿಸಿಕೊಂಡು ಸೋತ ನಗೆಯೊಂದಿಗೆ ನಮ್ಮ ದಾರಿ ನೋಡಿ ಕೊಳ್ಳುವ ನಮ್ಮ ಜಾಯಮಾನ ನಮಗೇ ಮುಳು ವಾಗುತ್ತಿದೆ. ವಿದೇಶಾಂಗ ಇಲಾಖೆಗೆ ಹೊಸರಕ್ತ ತುಂಬಿ, ಈ ಇಲಾಖೆ ನಡೆಸಲು ವಯಸ್ಸಾದವರ ಅಗತ್ಯವಿಲ್ಲ, ಯುವ ಅಧಿಕಾರಿಗಳಿಗೆ ಸಿಗಲಿ ಚುಕ್ಕಾಣಿ.