live in, three some, ನಮ್ಮ ದೇಶದಲ್ಲಿ?

ಅಹಮದಾಬಾದಿನಲ್ಲಿ ಬಾಳ ಗೆಳೆಯ /ತಿ ಯರನ್ನು ಕಂಡುಕೊಳ್ಳುವ ಒಂದು ಮೇಳವಂತೆ. ಬದುಕಿನ ಸಂಜೆಯಲ್ಲಿರುವವರು ಬದುಕಿನ ಒಂದಿಷ್ಟು ಪ್ರಕಾಶವನ್ನು ತಮ್ಮ ಬಾಳಿನೊಳಕ್ಕೆ ಬಿಟ್ಟು ಕೊಳ್ಳಲು ಸದವಕಾಶ. ಇದರಲ್ಲೇನು ವಿಶೇಷ? ವಿಶೇಷ ಇದೆ. ಇವರುಗಳು ಮದುವೆಯಾಗೋಲ್ಲವಂತೆ. “ಲಿವ್ ಇನ್” ಅಂತೆ. ಅಡುಗೆ ಚೆನ್ನಾಗಿದೆಯೋ ಇಲ್ಲವೋ ಎಂದು ನೋಡುವ tastiing ಥರ. ಅಮೇರಿಕನ್ ಅಥವಾ ಪಾಶ್ಚಾತ್ಯ ಸ್ಟೈಲ್ ಅಂತೆ. ಹೌದು. ಆಧುನಿಕ ಬದುಕಿಗೆ ಬರ್ಗರ್, ಬಾಸ್ಕಿನ್ ರಾಬಿನ್ಸ್, ಜೀನ್ಸ್ ಅನಿವಾರ್ಯ ಆಗೋದಾದರೆ ಹೆಣ್ಣು ಗಂಡಿನ ನಡುವಿನ ಬಂಧವೂ, ಬದುಕುವ ರೀತಿಯೂ ಅವರ ಹಾಗೇ ಯಾಕಾಗಕೂಡದು? ಎಲ್ಲಿಯವರೆಗೆ ನಾವು ಪಾಶ್ಚಾತ್ಯರನ್ನು ಅನುಕರಿಸ ಬಹುದು ಎನ್ನುವದು ಕಠಿಣ ಪ್ರಶ್ನೆ.  

ಅಸ್ಸಾಂ, ಕರ್ನಾಟಕ, ಗುಜರಾತ ರಾಜ್ಯಗಳಿಂದ ಬಂದಿದ್ದರಂತೆ ಜನ ಈ ಮೇಳದಲ್ಲಿ ಪಾಲುಗೊಳ್ಳಲು. ಒಂದು ರೀತಿಯ ಸಾಮೂಹಿಕ ಸ್ವಯಂವರ. ಈ ಅನಿಷ್ಠಕರ ಬೆಳವಣಿಗೆಯನ್ನು ಧಾರ್ಮಿಕ ನಾಯಕರುಗಳು ವಿರೋಧಿಸುವುದು ದೇಶದ, ಸಂಸ್ಕೃತಿಯ ಹಿತದೃಷ್ಟಿಯಿಂದ ಒಳ್ಳೆಯದು. ಇಂದು ಲಿವ್ ಇನ್, ನಾಳೆ three some ಮಟ್ಟಕೆ ಇಳಿಯಬಾರದು ಸಂಬಂಧಗಳು.     

ಮೇಲಿನ ಹೊಸ ಸಂಪ್ರದಾಯವನ್ನು ವಿರೋಧಿಸಿದ ವ್ಯಕ್ತಿಯೊಬ್ಬ ಹೇಳಿದ. ಹಿರಿಯರು ಈ ರೀತಿಯ ಸಂಬಂಧಗಳನ್ನು ಇಷ್ಟ ಪದುವುದಾದರೆ ನಾಳೆ ದಿನ ಕಿರಿಯರೂ ಅದನ್ನೇ ಬಯಸಬಹುದು. ಅವರೇಕೆ ತಾನೇ ಬಯಸಬಾರದು?  ತಮ್ಮ ಅಜ್ಜ  ಅಥವಾ ಅಜ್ಜಿ ಬಯಸಿದ್ದು ತನಗೂ ಇರಲಿ ಎಂದರೆ ತಡೆಯಲು ಸಾಧ್ಯವೇ ಅಥವಾ ತಡೆಯುವುದು ತರವೇ?

ಸುನ್ನತಿ ಕೂಡದು ಎನ್ನುವ ಸ್ಯಾನ್ ಫ್ರಾನ್ಸಿಸ್ಕೋ

ಅಮೆರಿಕೆಯ ಸ್ಯಾನ್ ಫ್ರಾನ್ಸಿಸ್ಕೋ ನಗರ ದಲ್ಲಿ ಇದೇ ವರ್ಷದ ನವೆಂಬರ್ ತಿಂಗಳಿನಲ್ಲಿ “ಸುನ್ನತಿ” ಯನ್ನು ನಿಷೇಧಿಸುವ ಕುರಿತು ಜನಾಭಿಪ್ರಾಯ ಕೇಳಲಾಗುತ್ತದೆ. ಪುರುಷರ ಗುಪ್ತಾಂಗದ ತುದಿಯ ಚರ್ಮವನ್ನು ಕಳೆಯುವ ಈ ಆಚರಣೆ ಕ್ರೈಸ್ತರಲ್ಲಿ ವ್ಯಾಪಕವಾಗಿಯೂ, ಯಹೂದ್ಯ ಮತ್ತು ಇಸ್ಲಾಂ ಧರ್ಮೀಯರಲ್ಲಿ ಕಡ್ದಾ ಯವಾಗಿಯೂ ಆಚರಿಸಲ್ಪಡುತ್ತದೆ.

ಅಮೆರಿಕೆಯಲ್ಲಿ ಶೇಕಡ ಎಂಭತ್ತು ಅಮೆರಿಕನ್ನರು ಸುನ್ನತಿ ಮಾಡಿಸಿಕೊಂಡಿರುತ್ತಾರೆ. ಕ್ರೈಸ್ತ ಧರ್ಮ ಪಾಲಿಸಲ್ಪಡುವ ಫಿಲಿಪ್ಪೀನ್ಸ್ ನಂಥ ದೇಶಗಳಲ್ಲಿ ಎಲ್ಲಾ ಪುರುಷರೂ ಸುನ್ನತಿ ಮಾಡಿಸಿ ಕೊಂಡಿರುತ್ತಾರೆ. ಮತ್ತು ಸುನ್ನತಿ ಮಾಡಿಸಿಕೊಂಡವ ಪರಿಪೂರ್ಣ ಪುರುಷ ಎಂದು ಹೆಮ್ಮೆ ಪಡುತ್ತಾರೆ. ಇಸ್ಲಾಂ ಧರ್ಮದ ಪ್ರಭಾವದ ಕಾರಣ ಫಿಲಿಪ್ಪಿನ್ಸ್ ನಲ್ಲಿ ಸುನ್ನತಿ ಪದ್ಧತಿ ಜಾರಿಗೆ ಬಂದಿತು ಎಂದು ಅಲ್ಲಿನ ಇತಿಹಾಸಕಾರರೊಬ್ಬರ ಅಭಿಪ್ರಾಯ.

ಇಸ್ಲಾಂನ ಪವಿತ್ರ ಗ್ರಂಥ ‘ದಿವ್ಯ ಕುರಾನ್’ ನಲ್ಲಿ ಇದರ ಉಲ್ಲೇಖವಿಲ್ಲದಿದ್ದರೂ ಇಸ್ಲಾಂ ಧರ್ಮ ಕ್ರೈಸ್ತ ಮತ್ತು ಯಹೂದ್ಯ ಧರ್ಮಗಳ ತರಹ ಅಬ್ರಹಾಮಿಕ್ ಧರ್ಮವಾದ್ದರಿಂದ ಮತ್ತು ಪ್ರವಾದಿ ಇಬ್ರಾಹಿಂ (ಅಬ್ರಹಾಂ) ಈ ಮೂರೂ ಧರ್ಮಗಳವರ ಪಿತಾಮಹರಾದ್ದರಿಂದ ಮುಸ್ಲಿಮರೂ ಕಡ್ಡಾಯವಾಗಿ ಸುನ್ನತಿ ಮಾಡಿಸಿ ಕೊಳ್ಳುತ್ತಾರೆ. ಅಷ್ಟೇ ಅಲ್ಲ, ಕುರಾನಿನಲ್ಲಿ ಆ ಪ್ರಸ್ತಾಪ ಇಲ್ಲದಿದ್ದರೂ ಪ್ರವಾದಿಗಳು ವಿಶ್ವಾಸಿಗಳಿಗೆ ಇರಲೇ ಬೇಕಾದ “ಫಿತ್ರ” ಎಂದು ಕರೆಯಲ್ಪಡುವ ಶುಚಿತ್ವಕ್ಕೆ ಸಂಬಂಧಿಸಿದ “ನೈಜ” (natural) ಅಭ್ಯಾಸ  ಅನುಸರಿಸಲೇಬೇಕು ಎಂದು ನಿರ್ದೇಶಿಸಿದ್ದಾರೆ. ಅವು, ೧. ಸುನ್ನತಿ ೨. ಗುಪ್ತಾಂಗದ ಸುತ್ತ ಶುಚಿ ೩. ಮೀಸೆ ಚಿಕ್ಕದಾಗಿ ಕತ್ತರಿಸುವುದು, ೪. ಉಗುರು ಕತ್ತರಿಸುವುದು ಮತ್ತು ೫. ಕಂಕುಳಿನ ಭಾಗದ ಕೂದಲನ್ನು ತೆಗೆಯುವುದು.     

ಸುನ್ನತಿಯನ್ನು ಕೇವಲ ಧಾರ್ಮಿಕ ಕಟ್ಟಳೆಯಾಗಿ ಮಾತ್ರ ಮಾಡಿಸಿ ಕೊಳ್ಳದೆ ಶುಚಿತ್ವ ಮತ್ತು ಲೈಂಗಿಕ ಆರೋಗ್ಯದ ದೃಷ್ಟಿಯಿಂದಲೂ ಮಾಡಿಸಿಕೊಳ್ಳಲಾಗುತ್ತದೆ. ಇಸ್ಲಾಂ ಧರ್ಮೀಯರಿಗೆ ಪ್ರತೀದಿನ ಕಡ್ಡಾಯವಾದ ಐದು ಹೊತ್ತಿನ ಆರಾಧನಾ ನಿರ್ವಹಣೆಗೆ ದೈಹಿಕ ಶುಚಿತ್ವದೊಂದಿಗೆ “ಶೌಚ” ಶುಚಿತ್ವ ಇರುವುದೂ ಅತೀ ಅವಶ್ಯ. ಮೂತ್ರ ವಿಸರ್ಜನೆ ನಂತರ ನೀರಿನೊಂದಿಗೆ ಶುಚಿ ಮಾಡಿಕೊಳ್ಳಲೇ ಬೇಕು, ಹಾಗೆ ಯಾವುದಾದರೂ ಕಾರಣಕ್ಕೆ ಶುಚಿ ಮಾಡಿ ಕೊಳ್ಳಲು ಆಗದ ಸಂದರ್ಭದಲ್ಲಿ ಮಸ್ಜಿದ್ ಒಳಗೆ ಪ್ರವೇಶಿಸುವಂತಿಲ್ಲ. ಹಾಗೆಯೆ ಸುನ್ನತಿ ಮಾಡಿಸಿಕೊಳ್ಳದಿದ್ದವರು ನಮಾಜ್ ಮಾಡುವುದಾಗಲೀ, ಮಸ್ಜಿದ್ ಒಳಗೆ ಪ್ರವೇಶಿಸುವುದಾಗಲೀ ಕೂಡದು. ಸುನ್ನತಿ ಮಾಡಿಕೊಳ್ಳದ, ಶೌಚ ಶುಚಿತ್ವ ಅನುಸರಿಸದವರು ಪವಿತ್ರ ಕುರಾನ್ ಸಹ ಮುಟ್ಟುವಂತಿಲ್ಲ ಎಂದು ಸಂಪ್ರದಾಯವಾದಿಗಳ ನಿಲುವು.

ಈಗ ಇದಕ್ಕೆ ಚ್ಯುತಿ ಅಮೆರಿಕೆಯ ರಾಜ್ಯವೊಂದರಲ್ಲಿ. ಮುಸ್ಲಿಂ ವಿರೋಧಿ ಅಥವಾ Islamophobia ಕಾರಣ ಈ ನಿಯಮವನ್ನು ಜಾರಿಗೊಳಿಸುತ್ತಿಲ್ಲವಾದರೂ ಬಹಳಷ್ಟು ಸಂಖ್ಯೆಯಲ್ಲಿರುವ ಮುಸ್ಲಿಮರ ವಿರೋಧ ಈ ನಿಯಮಕ್ಕೆ ಬರುತ್ತಿದೆ. ಕ್ರೈಸ್ತರೂ ಮತ್ತು ಯಹೂದ್ಯರೂ ಈ ಕ್ರಮವನ್ನು ಟೀಕಿಸಿ ಇದು ಅಮೆರಿಕೆಯ first amendment ನಲ್ಲಿ ನೀಡಲಾಗಿರುವ ಧಾರ್ಮಿಕ ಆಚರಣೆಗಳ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದು ವಾದಿಸುತ್ತಿದ್ದಾರೆ.  

ಅಮೆರಿಕೆಯಲ್ಲಿ ಸುನ್ನತಿಗೆ ವಿರೋಧ ಏಕೆಂದರೆ ಅದು ಅಪಾಯಕಾರಿ ಎಂದು. ಮುಂದೊಗಲನ್ನು ಕತ್ತರಿಸುವ ಸಮಯ ಶರೀರಕ್ಕೆ ಅಪಾಯ ಸಂಭವಿಸಬಹುದು, ಸೋಂಕು ತಗುಲಬಹುದು ಎನ್ನುವ ಭಯ. ಸುನ್ನಿ ಮಾಡಿಸಿ ಕೊಂಡ ಪುರುಷರಿಗೆ ಲೈಂಗಿಕ ರೋಗಗಳು ತಗಲುವ ಸಾಧ್ಯತೆ ಇಲ್ಲ ಎಂದು ವೈದ್ಯಕೀಯ ಅಧ್ಯಯನಗಳ ಅಭಿಪ್ರಾಯ. ಹಾಗೆಯೇ ಸ್ತ್ರೀಯರಿಗೂ ಲೈಂಗಿಕ ರೋಗ ತಗಲುವ ಅಪಾಯ ಇರುವುದಿಲ್ಲ. ಕೆಲವು ತೆರನಾದ ಕ್ಯಾನ್ಸರ್ ರೋಗಗಳಿಂದಲೂ ಪುರುಷರೂ ಮತ್ತು ಸ್ತ್ರೀಯರು ಸುರಕ್ಷಿತ ಎನ್ನುವುದು  ವೈದ್ಯರುಗಳ ಅಭಿಪ್ರಾಯ.

ಸುನ್ನತಿ ಶಸ್ತ್ರ ಚಿಕಿತ್ಸೆ ಅತ್ಯಂತ ವೇದನೆಯಿಂದ ಕೂಡಿದ್ದು, ಎಳೇ ಮಕ್ಕಳ ಮೇಲೆ ಇದನ್ನು ಅವರ ಸಮ್ಮತಿಯಿಲ್ಲದೆ ಹೇರಲಾಗುವುದರಿಂದ ಇದು ಕೂಡದು ಎನ್ನುವುದು ವಿರೋಧಿಗಳ ನಿಲುವು. ಸುನ್ನತಿ ಸಹಿಸಲಾಗದ  ನೋವನ್ನು ನೀಡುವುದಿಲ್ಲ ಎಂದು ಇದನ್ನು ಮಾಡಿಸಿ ಕೊಂಡ ಕೋಟ್ಯಂತರ ಜನರ ಅಭಿಪ್ರಾಯ. ಹದಿನೈದು ಇಪ್ಪತ್ತು ವರ್ಷಗಳ ಮೊದಲು ಅರಿವಳಿಕೆ ನೀಡದೆ ಹೆಚ್ಚಾಗಿ ಕ್ಷೌರಿಕರು ಸುನ್ನತಿ ಮಾಡುತ್ತಿದ್ದರು. ಈಗ ವೈದ್ಯಕೀಯವಾಗಿ ಅರಿವಳಿಕೆ ನೀಡಿ ಯಾವುದೇ ತೆರನಾದ ಸೊಂಕಾಗಲೀ, ನೋವಾಗಲೀ ಆಗದಂತೆ ಸುನ್ನತಿಯನ್ನು ಮಾಡುತ್ತಾರೆ.

ಯಹೂದ್ಯರಲ್ಲಿ ಸುನ್ನತಿ ಮಾಡಿಸಿ ಕೊಳ್ಳುವುದು ದೇವರ ಮತ್ತು ಅಬ್ರಹಾಮರ ನಡುವಿನ ಒಪ್ಪಂದದ ಆಚರಣೆಯಾಗಿ. ಯಹೂದ್ಯರು ಗಂಡು ಮಗು ಜನಿಸಿದ ಎಂಟನೆ ದಿನ ಸುನ್ನತಿ ಮಾಡುತ್ತಾರೆ. ಇಸ್ಲಾಂ ಧರ್ಮದಲ್ಲಿ ಮಗು ಹುಟ್ಟಿದ ಕೂಡಲೇ ಮಾಡುವುದಾದರೂ, ಅವರವರ ಅನುಕೂಲಕ್ಕೆ ತಕ್ಕಂತೆ ೧೦-೧೨ ವರ್ಷಗಳ ಒಳಗೆ ಮಾಡುತ್ತಾರೆ.

ಸುನ್ನತಿ ವಿರುದ್ಧ ವಾದಿಸುವವರು ಯಾವುದೇ ರೀತಿಯ ಕಾರಣಗಳನ್ನು ನೀಡಿದರೂ ವಿವೇಚನೆಗೆ  ನಿಲುಕುವ ಯಾವುದೇ ಧಾರ್ಮಿಕ  ಆಚರಣೆಗಳಿಗೆ ಯಾರದೇ ಶಿಫಾರಸ್ಸಿನ ಅಥವಾ ವಿರೋಧದ ಪರಿವೆ ಇರಕೂಡದು. ಧಾರ್ಮಿಕ ಆಚರಣೆಗಳನ್ನು ವಿರೋಧಿಸುವುದು, ಧರ್ಮಗಳಿಗೆ ಸಂಬಂಧಿಸಿದ ಪ್ರತಿಯೊಂದನ್ನು ಟೀಕಿಸುವುದು ಕೆಲವರ ಜಾಯಮಾನ ಸರಿಯಲ್ಲ. ಆಚರಣೆಗಳನ್ನು ವಿರೋಧಿಸುವವರಿಗೆ ವಿರೋಧಿಸಳು ಇರುವ ಹಕ್ಕಿನಂತೆಯೇ ಅದರ ಪರವಾಗಿ ನಿಲ್ಲುವವರಿಗೂ ಅದೇ ತೆರನಾದ ಹಕ್ಕಿದೆ ಎನ್ನುವದನ್ನು ಮನಗಾಣಬೇಕು.

ಸುನ್ನತಿ ಬಗ್ಗೆ ಒಂದು ಜೋಕು: ಒಮ್ಮೆ ಒಬ್ಬ ಹುಡುಗನಿಗೆ ಸುನ್ನತಿ ಮಾಡಿಸಲು ಮನೆಯವರು ನಿರ್ಧರಿಸುತಾರೆ. ಅವನು ವಯಸ್ಸಿನಲ್ಲಿ ಸ್ವಲ್ಪ ದೊಡ್ಡವನಾಗಿರುತ್ತಾನೆ. ಅವನ ಮಿತ್ರರುಗಳು ತುಂಬಾ ನೋವಾಗುತ್ತೆ ಈ ವಯಸ್ಸಿನಲ್ಲಿ ಕತ್ತರಿಸಿಕೊಂಡಾಗ ಎಂದು ಹೆದರಿಸಿದ ಕಾರಣ ಅವನು ರಂಪಾಟ ಮಾಡುತ್ತಾನೆ. ಒಂದೇ ಸಮನೆ ಅಳುತ್ತಾ ನನ್ನನ್ನು ಬಿಟ್ಟು ಬಿಡಿ ಎಂದು ಬೇಡುತ್ತಿದ್ದ ಅವನನ್ನು ಕಂಡು ಅವನ ತಾಯಿಗೆ ಮರುಕ ತೋರುತ್ತದೆ. ಆಕೆ ಕೂಗಿ ಹೇಳುತ್ತಾಳೆ, ಪಾಪ ಆ ಹುಡುನನ್ನು ಯಾಕೆ ಹಾಗೆ ಎಳೆದು ಕೊಂಡು ಹೋಗ್ತೀರಾ, ಮೊದಲು ಅವನ ಅಪ್ಪನಿಗೆ ಸುನ್ನತಿ ಮಾಡಿಸಿ, ನಂತರ ಮಗನಿಗೆ ಮಾಡಿಸುವಿರಂತೆ ಎಂದು ಹೇಳಿ ಎಲ್ಲರನ್ನೂ ದಂಗು ಬಡಿಸುತ್ತಾಳೆ. ಹುಡುಗನ ಬದಲಿಗೆ ಈಗ ಹರಕೆ ಕುರಿಯಾಗುವ ಸರತಿ ಅಪ್ಪನದಾಗುತ್ತದೆ.

ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು

ಕಣ್ಣಿಗೆ ಕಣ್ಣು, ಹಲ್ಲಿಗೆ, ಹಲ್ಲು – ಕ್ರೈಸ್ತ ಧರ್ಮದ “ಹಳೇ ಒಡಂಬಡಿಕೆ” ಯ ಈ ಮಾತುಗಳು ಇಸ್ಲಾಮಿನ ಶರಿಯಾ ಕಾನೂನಿನಲ್ಲೂ ಶಿಫಾರಸು ಮಾಡಲಾಗಿದೆ. ಒಂದು ರೀತಿಯ ಸೇಡಿಗೆ ಸೇಡು. ಆದರೆ ಇದನ್ನು ತಪ್ಪು ಎನ್ನುವವರೂ ಕೆಲವೊಮ್ಮೆ ಘಟನೆಗಳ, ಅಪರಾಧಗಳ ಕ್ರೌರ್ಯದ ಗಂಭೀರತೆಯನ್ನು ಗಮನದಲ್ಲಿಟ್ಟು ಕೊಂಡು ಈ ರೀತಿಯ retributory justice ವಿಧಾನ ಸರಿ ಎಂದು ವಾದಿಸುವರು.   

ಕಣ್ಣಿಗೆ ಕಣ್ಣು ಬೇಕು ಎನ್ನುವವರು ಒಂದು ಕಡೆಯಾದರೆ ಮಾನವೀಯ ದೃಷ್ಟಿಯಿಂದ ದೃಷ್ಟಿಯನ್ನು ಬೇರೆಡೆ ಹೊರಳಿಸಬೇಕು ಎನ್ನುವವರು ಮತ್ತೊಂದು ಕಡೆ. ಪ್ರತೀಕಾರ ಮಾನವ ಸಹಜ ಗುಣ. ಪುಟ್ಟ ಮಕ್ಕಳ ಪ್ರತಿಕ್ರಿಯೆಗಳೂ ಈ  ಮಾನವ ಸಹಜ ಗುಣಕ್ಕೆ ಅನುಗುಣವಾಗಿಯೇ ಇರುವುದನ್ನು ಗಮನಿಸಿದ್ದೇವೆ. ಕ್ಷಮಿಸುವವನು ಉದಾರಿ, ಆ ಗುಣ ಎಲ್ಲರಿಗೂ ಬರಬೇಕೆಂದಿಲ್ಲ. ಸಮಾಜ ಶಿಕ್ಷೆಯನ್ನು ಪ್ರತೀಕಾರ ಎನ್ನುವ ದೃಷ್ಟಿಯಿಂದ ನೋಡಬಾರದು, ಹಾಗೆ ನೋಡಿದಾಗ ಒಸಮಾ ಬಿನ್ ಲಾದೆನ್ ನ ವಧೆಯೂ ಸಮ್ಮತವೆನ್ನಿಸದು. ಒಸಾಮಾ ನ ವಧೆ ಸರಿ ಎಂದು ನಾಗರೀಕ ಸಮಾಜ ಖಂಡಿತವಾಗಿ ಒಪ್ಪುತ್ತದೆ. ಕೆಲವರು ಅವನನ್ನು ವಿಚಾರಣೆಗೆ ಒಳಪಡಿಸಿ ಶಿಕ್ಷಿಸಬೇಕಿತ್ತು ಎನ್ನುವವರೂ ಇದ್ದಾರೆ. ಆದರೆ ಆತನನ್ನು ಹಿಡಿದು ವಿಚಾರಣೆಗೆ ಒಳಪಡಿಸಲು ಮಾಡಿ ಕೊಳ್ಳ ಬೇಕಾದ ಸಿದ್ಧತೆಗಳನ್ನು ನೋಡಿದಾಗ, ಅದರ ಎಡರು ತೊಡರು ಗಳನ್ನು, ಗಮನಕ್ಕೆ ತೆಗೆದು ಕೊಂಡಾಗ targeted elemination ಹೆಚ್ಚು ಪ್ರಾಯೋಗಿಕ ಎಂದು ತೋರುತ್ತದೆ.  

ಪ್ರತಿಭಾವಂತಳಾದ ಇಂಜಿನಿಯರಿಂಗ್ ಪದವೀಧರೆಯಾದ ಇರಾನಿನ ಯುವತಿ ಅಮೀನ ಬೆಹ್ರಾಮಿಯ ಜೀವನ ಸಂಪೂರ್ಣವಾಗಿ ನಾಶವಾಗಿ ಹೋಯಿತು, ತನ್ನನ್ನು ಬಯಸಿದ ಮಾಜಿದ್ ಮೋವಾಹೆದಿ ಎನ್ನುವ ನರ ರಾಕ್ಷಸನಿಂದ. ಆಮಿನಾಳನ್ನು ವಿವಾಹವಾಗಲು ಬಯಸಿದ್ದ ಮಾಜಿದ್ ಈಕೆಯ ಅಸಮ್ಮತಿಯಿಂದ ಕ್ರುದ್ಧನಾದ. ನನ್ನನ್ನು ಮದುವೆಯಾಗದಿದ್ದರೆ ಕೊಲ್ಲುತ್ತೇನೆ ಎಂದು ಮೊದಲಿಗೆ ಬೆದರಿಸಿದ್ದ ಇವನು ಮನಸ್ಸು ಬದಲಿಸಿ ನನಗೆ ಸಿಗದ ಇವಳು ಬೇರಾರಿಗೂ ಸಿಗಕೂಡದು ಎಂದು ತೀರ್ಮಾನಿಸಿದ . ಒಂದು ಬಕೆಟ್ ತುಂಬಾ ಆಸಿಡ್ ಅನ್ನು ಅಮೀನಾಳ ಮುಖದ ಮೇಲೆ ಎರಚಿದ. ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡ ಈಕೆ ಭಯ ಹುಟ್ಟಿಸುವಂಥ ಕುರೂಪಿಯಾದಳು.  ಇರಾನಿನ ನ್ಯಾಯಾಲಯ ದಂಡವನ್ನೂ ಸೆರೆವಾಸದ ಶಿಕ್ಷೆಯನ್ನೂ ವಿಧಿಸಿತು ಮಾಜಿದ್ ನಿಗೆ. ಈ ತೀರ್ಪಿಗೆ ಅಮೀನ ಸಮ್ಮತಿಸಲಿಲ್ಲ. ನನ್ನ ನೋವನ್ನು  ಸ್ವತಃ ತನ್ನ ಕಣ್ಣು ಗಳನ್ನು ಕಳೆದು ಕೊಳ್ಳುವ ಮೂಲಕ ಮಾತ್ರ ಮಾಜಿದ್ ಅರಿಯಬಲ್ಲ ಎಂದು ವಾದಿಸಿದಳು. ಇದೇ ೧೪ ಮೇ, ೨೦೧೧ ರಂದು ಆಕೆಗೆ ಸಿಕ್ಕಿತು ಬಯಸಿದ ನ್ಯಾಯ. ಹತ್ತಿರದ ಆಸ್ಪತ್ರೆಗೆ ಮಾಜಿದ್ ನನ್ನು ದಾಖಲಿಸಿ ಅವನಿಗೆ ಅರಿವಳಿಕೆ ಕೊಟ್ಟು ಅವನ ಕಣ್ಣುಗಳಲ್ಲಿ ಆಸಿಡ್ ಪ್ರೋಕ್ಷಣೆ ಮಾಡಲು ತೀರ್ಮಾನ ವಾಯಿತು. ಈಗ ಆಗಮನವಾಯಿತು “ಕರುಣಾನಿಧಿ” ಜನರ ದಂಡು. amnesty international ನೇತೃತ್ವದ ಈ ದಂಡು ಹೇಳಿದ್ದು ಈ ರೀತಿ ನ್ಯಾಯ “ ಕಿರುಕುಳಕ್ಕೆ ಸಮಾನ” ಎಂದು. ಕ್ರೂರ ಮಾಜಿದ್ ಎಸಗಿದ ಕೃತ್ಯಕ್ಕೆ ಯಾವ ರೀತಿಯ ವಿಶ್ಲೇಷಣೆ ಕೊಡುತ್ತದೋ ಅಮ್ನೆಸ್ಟಿ. ಪಾಶ್ಚಾತ್ಯರ ಯಾವುದೇ ಮಾತಿಗೂ ಒಲ್ಲೆ ಎಂದು ಹೇಳಿ ಸುಖ ಅನುಭವಿಸುವ ಇರಾನ್ amnesty ಯ ಮಾತಿಗೆ ತಲೆ ಬಾಗಿತು. ಆದರೆ ಅಮೀನಾ ಮಾತ್ರ ತನ್ನ ಹೊರಾಟವನ್ನು ಖಂಡಿತಾ ಮುಂದುವರೆಸುವಳು. ಕಣ್ಣಿಗೆ ಕಣ್ಣು, ಈ ನ್ಯಾಯದಿಂದ ಮಾತ್ರ ಈಕೆ ತೃಪ್ತಳಾಗುವಳು. ಈ ತೆರನಾದ ನ್ಯಾಯದಿಂದ ಭಾವೀ ರಾಕ್ಷಸರು ಪಾಠ ಕಲಿಯಬೇಕು.          

ಗಾಂಧೀಜಿ ಪ್ರಕಾರ ಕಣ್ಣಿಗೆ ಕಣ್ಣು ಎನ್ನುವ ಪ್ರತೀಕಾರದ ಶಿಕ್ಷೆಯಿಂದ ಪ್ರಪಂಚವೇ ಕುರುಡಾಗಬಹುದು. ಇಡೀ ಪ್ರಪಂಚವೇ ಅನೈತಿಕತೆ, ಅನ್ಯಾಯ, ಹಿಂಸೆ ಎಸಗುವ ಕಣ್ಣಾಗುವುದಾದರೆ ಅದು ಕುರುಡಾಗಿರುವುದೇ ಹೆಚ್ಚು ಲೇಸು. ಇಲ್ಲದಿದ್ದರೆ ಪ್ರಪಂಚವೇ ಕುರೂಪಗೊಳ್ಳುವ ಸಾಧ್ಯತೆ ಹೆಚ್ಚು. ಗಾಂಧೀಜಿಯ ಈ ಮಾತಿಗೆ ನಾವು ಸಮ್ಮತಿಸಿದರೆ ಅವರನ್ನು ವಧಿಸಿದ ದ್ರೋಹಿಯನ್ನು ದೇಶ ಸುಮ್ಮನೆ ಬಿಡಬೇಕಿತ್ತು. ಯೋಚಿಸಿ ನೋಡಿ, ಮೈ ಝುಮ್ಮೆನ್ನುವುದಿಲ್ಲವೇ?  ಕೆಲವೊಂದು ಮಾತುಗಳು ಎಲ್ಲಾ ಕಾಲಕ್ಕೂ ಉದ್ಧರಿಸಲು ಉಪಯೋಗಕ್ಕೆ ಬರಬಹುದು, ದಯೆಯ ಆ ಮಾತುಗಳನ್ನು ಭಾಷಣಗಳಲ್ಲೂ, ಬರಹಗಳಲ್ಲೂ ಉಪಯೋಗಿಸಲು ಸುಂದರವಾಗಬಹುದು. quote ರೂಪದಲ್ಲಿ ಆಕರ್ಷಕ ಈ ಹೇಳಿಕೆಗಳು. ಆದರೆ ಸಮಾಜದ ಸ್ವಾಸ್ಥ್ಯವನ್ನೂ, ಹಿತವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡಾಗ ಮಾಜಿದ್ ನಂಥ ದುರುಳರ ಕಣ್ಣುಗಳನ್ನು ಕೀಳಲೇಬೇಕು. ಮುಗ್ಧ, ಅಮಾಯಕ ಹೆಣ್ಣಿನ ಕಣ್ಣುಗಳನ್ನು ಕಿತ್ತ ಅವನ ಕಣ್ಣುಗಳು ತನ್ನ ಕ್ರೌರ್ಯವನ್ನು ಕಂಡು ಹಿಗ್ಗಬಾರದು. ಅಂತಾರಾಷ್ಟ್ರೀಯ ಒತ್ತಡಕ್ಕೆ ಇರಾನ್ ತಲೆಬಾಗದೆ ಆಕೆ ಬಯಸಿದ ನ್ಯಾಯವವನ್ನು ಅವಳಿಗೆ ದಯಪಾಲಿಸಲೇಬೇಕು.  

ಹಿಂಸೆಗೆ ಪ್ರತಿ ಹಿಂಸೆಯಾಗಿ ಅಸ್ತ್ರ ದ ಪ್ರಯೋಗ ನಡೆಯದಿದ್ದರೆ ಪ್ರಪಂಚ ಸುರಕ್ಷಿತ ಸ್ಥಳವಲ್ಲ. ಸ್ಪೇನ್ ದೇಶದ ದ್ವೀಪವೊಂದರ ಪ್ರವಾಸದಲ್ಲಿದ್ದ ಇಂಗ್ಲೆಂಡಿನ ಮಧ್ಯ ವಯಸ್ಕ ಮಹಿಳೆಯೊಬ್ಬರನ್ನು ಯಾವುದೇ ಕಾರಣವಿಲ್ಲದೆ ಓರ್ವ ಯುವಕ ೧೫ ಬಾರಿ ಚಾಕುವಿನಿಂದ ಇರಿದದ್ದು ಸಾಲದು ಎಂದು ಆಕೆಯ ರುಂಡಚ್ಛೇದ ಮಾಡಿ ರಸ್ತೆ ಬದಿಗೆ ಎಸೆದ. ಈ ಮಹಿಳೆ ಪ್ರವಾಸದ ವೇಳೆ ಅಲ್ಲಿನ ಶಾಲೆಯ ಮಕ್ಕಳಿಗೆ ರಸ್ತೆ ಸುರಕ್ಷತೆ ಬಗ್ಗೆ ಪಾಠ ಹೇಳಿ ಕೊಡುತ್ತಿದ್ದಳಂತೆ. ಇಂಥ ಹಿಂಸ್ರ ಪಶುಗಳನ್ನು ಸಮಾಜ ಸಹಿಸಿದಾಗ, ಅವರಿಗೆ ತಕ್ಕ ಶಿಕ್ಷೆ ಕೊಡುವಲ್ಲಿ ವಿಫಲವಾದಾಗ ಇಂಥ ಕರುಳು ಹಿಂಡುವ ಘಟನೆಗಳು ಎಲ್ಲೆಲ್ಲೂ ಕಾಣಲು ಸಿಗುತ್ತವೆ. ಕೊಲೆಗಾರ ಒಂದೆರಡು ವರ್ಷ ಜೇಲಿನಲ್ಲಿ ಕಳೆದು ಸಮಾಜಕ್ಕೆ ಮರಳಿ ಬರುತ್ತಾನೆ ತನ್ನ ಮಿಕವನ್ನು ಅರಸುತ್ತಾ.