ರಾಜಧಾನಿಯಲ್ಲಿ ನಡೆದ ಅತ್ಯಾಚಾರಕ್ಕೆ ಕಾರಣ ಯಾರು?

rape womenundersiegeprojectdotorg

ನವದೆಹಲಿಯಲ್ಲಿ ನಡೆದ ಅಮಾನುಷ ಅತ್ಯಾಚಾರದ ವಿರುದ್ಧ ದೇಶದಲ್ಲಿ ದೊಡ್ಡ ರೀತಿಯಲ್ಲಿ ಪ್ರತಿಭಟನೆಗಳು ನಡೆದವು, ಮಹಿಳೆಯರು ಮಾನವಾಗಿ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ವಾದುದಕ್ಕೆ ನ್ಯಾಯಾಲಯಗಳನ್ನೂ, ರಾಜಕಾರಣಿ, ಪೊಲೀಸರನ್ನು ನೇರವಾಗಿ ದೂರಿದ ಜನ ಅತ್ಯಾಚಾರಿಗಳಿಗೆ ಗಲ್ಲಿನ ಶಿಕ್ಷೆ ಕೊಡಲು ಆಗ್ರಹಿಸಿದರು. ಕಾಮಪಿಪಾಸು ಪಶುಗಳ ಕೈಗೆ ಸಿಕ್ಕು ಜರ್ಜರಿತಳಾದ ಯುವತಿ ಸಾವಿನೊಂದಿಗೆ ವ್ಯರ್ಥವಾಗಿ ಸೆಣಸಿ ಕೊನೆಯುಸಿರೆಳೆದಳು.

ಟೈಮ್ಸ್ ಆಫ್ ಇಂಡಿಯಾದಲ್ಲಿ ಒಂದು ಲೇಖನ (why Indian men rape – Anand Soondas) ಓದಲು ಸಿಕ್ಕಿತು. ‘ಭಾರತೀಯ ಗಂಡು ಅತ್ಯಾಚಾರವನ್ನೇಕೆ ಎಸಗುತ್ತಾನೆ?’ ರೈಲಿನಲ್ಲಿ ಕಳೆದ ಜುಲೈ ತಿಂಗಳಿನಲ್ಲಿ ಅಸ್ಸಾಮಿನಲ್ಲಿ ನಡೆದ ಹೆಣ್ಣು ಮಗಳೊಬ್ಬಳ ಮೇಲೆ ನಡೆದ ದೌರ್ಜನ್ಯದ ಕುರಿತ ನಡೆದ ವಿದ್ಯಾವಂತರ ಚರ್ಚೆಯಲ್ಲಿ ಒಬ್ಬ ಹೆಣ್ಣಿನ ಕುರಿತು ಹಗುರವಾಗಿ ಮಾತನಾಡಿದ ಬಗ್ಗೆ ಬರೆದಿದ್ದರು ಲೇಖಕರು. ಹಲ್ಲೆಯ ಬಗ್ಗೆ ಮಾತನಾಡುತ್ತಾ ವಾಯು ಸೇನೆಯ ಅಧಿಕಾರಿ ಕೇಳಿದ್ದು ಆಕೆಗೆ ರಾತ್ರಿಯಲ್ಲಿ ಹೊರಗೇನು ಕೆಲಸ ಎಂದು. ಆ ಯುವತಿ ಮದ್ಯ ಸೇವಿಸುತ್ತಿದಳು ಮತ್ತು ಕೆಲವು ಪುರುಷರೊಂದಿಗೆ ಆಕೆ ಚೆಲ್ಲಾಟ ವಾಡುತ್ತಿದ್ದಳು, ಅದಕೆ ತಕ್ಕ ಶಾಸ್ತಿ ಯಾಯಿತು ಎಂದು ಆತ ಹೇಳಿದಾಗ ಕ್ರುದ್ಧನಾದ ಸಹ ಪ್ರಯಾಣಿಕ ಅಧಿಕಾರಿಯನ್ನು ಉದ್ದೇಶಿಸಿ. ಮುಂದಿನ ಸಲ ನಿನ್ನ ಸೋದರಿಯ ಪೃಷ್ಠಗಳನ್ನು ಯಾರಾದರೂ ಹಿಂಡಿದಾಗ ನಿನ್ನ ಸೋದರಿ ಎಷ್ಟು ಮರ್ಯಾದಸ್ಥಳು ಎನ್ನುವುದರ ಬಗ್ಗೆ ಮೊದಲು ಪೊಲೀಸರು ತನಿಖೆ ನಡೆಸಲಿ ಎಂದು ಹೇಳಿದನಂತೆ. ದೌರ್ಜನ್ಯಕ್ಕೊಳಗಾದ ಹೆಣ್ಣುಮಗಳ ಬಗೆಗಿನ ಆ ಅಧಿಕಾರಿಯ ಅಭಿಪ್ರಾಯ ನೋಡಿದಿರಲ್ಲ, ಇದು ವಿದ್ಯಾವಂತರ ಕಥೆ.

ಸಮಾಜವನ್ನು, ದೇಶವನ್ನು ಕಂಗೆಡಿಸುವ ಅತ್ಯಾಚಾರದಂಥ ಘಟನೆಗಳನ್ನು ತಡೆಯಲು ಸಮಾಜ ತನ್ನ ಯುವಜನರ ನೈತಿಕ ಮೌಲ್ಯಗಳು ಪತನಗೊಳ್ಳುತ್ತಿರುವ ಕಡೆ ಗಮನ ನೀಡಬೇಕು. ಗತಿಸಿಹೋದ ವೈಭವದ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದರಿಂದಲೋ, ಉತ್ಸವಗಳನ್ನು ಆಚರಸುವುದರಿಂದಲೋ ಸಮಾಜದ ಏಳಿಗೆ ಅಥವಾ ಸುರಕ್ಷತೆ ಅಸಾಧ್ಯ. ನವ ದೆಹಲಿಯ ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ನಮ್ಮ ದೇಶದಲ್ಲಿ ಅತ್ಯಚಾರದ ಕುರಿತು ಬಹು ದೊಡ್ಡ ಚರ್ಚೆಯನ್ನೇ ಆರಂಭಿಸಿದೆ. “ನಿರ್ಭಯ” ಎನ್ನುವ ಯುವತಿಯ ದಾರುಣ ಅಂತ್ಯದ ನಂತರ ಸಮಾಜ ಎಚ್ಚೆತ್ತು ಕೊಳ್ಳಲು ಆರಂಭಿಸುತ್ತಿದೆ. ಅದರ ನಡುವೆಯೇ ಮಹಿಳೆ ಲಕ್ಷ್ಮಣ ರೇಖೆಯನ್ನು ದಾಟಬಾರದ, ದಾಟಿದರೆ ಆಗುವ ದುಷ್ಪರಿಣಾಮಗಳ ಕುರಿತ ಬೋಧನೆಗಳು (ಮಧ್ಯ ಪ್ರದೇಶದ ಮಂತ್ರಿ ಮಹೋದಯ ಹೇಳಿದ್ದು) ಕೇಳಿ ಬರುತ್ತಿವೆ. ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ಮಹಿಳೆಯನ್ನು ಹೊಣೆಗಾರಳನ್ನಾಗಿಸುವ ಮಾತುಗಳೂ ಕೇಳಿ ಬರುತ್ತಿವೆ.

ರಾಜಧಾನಿಯಲ್ಲಿ ಅಮಾಯಕ ಯುವತಿಯ ಮೇಲಿನ ಅತ್ಯಾಚಾರ ನಡೆದ ನಂತರ ಅತ್ಯಾಚಾರಕ್ಕೆ ಕಾರಣವಾಗುವ ಅಂಶಗಳನ್ನು ಚರ್ಚಿಸ ತೊಡಗಿದ ದೇಶಕ್ಕೆ ಮತ್ತೊಂದು ರೀತಿಯ ಆಘಾತ ರಾಜಕಾರಣಿಗಳ ಮಾತಿನಿಂದ. ಹಿಂದುತ್ವ ರಾಷ್ಟ್ರವಾದೀ ಸಂಘಟನೆ ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್ ಈ ಚರ್ಚೆಗೆ ಮತ್ತಷ್ಟು ಬಿಸಿ ಹೆಚ್ಚಿಸಿದರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ. ಪತಿ ಮತ್ತು ಪತ್ನಿ ಸಾಮಾಜಿಕ ಕರಾರಿನ ಕಟ್ಟುಪಾಡಿನ ಒಳಗೆ ತಮ್ಮ ಜವಾಬ್ದಾರಿ ನಿರ್ವಹಿಸಬೇಕು, ಪತಿ ಹೊರಗೆ ದುಡಿದರೆ ಮಹಿಳೆ ಮನೆಯೊಳಗಿದ್ದು ತನ್ನ ಜವಾಬ್ದಾರಿ ಪೂರೈಸಬೇಕು. ಈ ಜವಾಬ್ದಾರಿಗಳು ಅದಲು ಬದಲಾದಾಗ ಅಥವಾ ಮಹಿಳೆ ತನ್ನ ಜವಾದ್ಬಾರಿ ಮರೆತು ಮನೆಯ ಹೊರಗಿನ ಚಟುವಟಿಕೆಗಳಲ್ಲಿ ನಿರತಳಾದಾಗ ಆಗುವ ಪರಿಣಾಮಗಳನ್ನು ವಿಶ್ಲೇಷಿಸಿ ವಿವಾದದ ಸೃಷ್ಟಿಗೆ ಕಾರಣರಾದರು. ಅತ್ಯಾಚಾರ ನಡೆಯುತ್ತಿರುವುದು ವಿದೇಶೀ ಸಂಸ್ಕಾರ ಪ್ರೇರಿತ ‘ಇಂಡಿಯಾ’ ದಲ್ಲಿ, ಸಂಪ್ರದಾಯಸ್ಥ ‘ಭಾರತ’ದಲ್ಲಿ ಅಲ್ಲ ಎನ್ನುವ ಮಾತಿನೊಂದಿಗೆ ದೇಶದೊಳಗೇ ಮತ್ತೊಂದು ದೇಶವನ್ನು ಕಾಣುವ ವ್ಯರ್ಥ ಪ್ರಯತ್ನ ಸಹ ಮಾಡಿದರು ಭಾಗವತ್. ಮಾಧ್ಯಗಳು, ಸಾಮಾಜಿಕ ವೆಬ್ ತಾಣಗಳ ಮೂಲಕ ನಗರಗಳಲ್ಲಿ ನಡೆಯುತ್ತಿರುವ ಅತ್ಯಾಚಾರದ ವರದಿಯಾದರೂ ಓದಲಿಕ್ಕೆ ಸಿಗುತ್ತಿದೆ. ವರದಿಯಾಗದ, ಬೆಳಕಿಗೆ ಬಾರದ ಕಾರಣಕ್ಕಾಗಿ ಗ್ರಾಮಾಂತರ ಪ್ರದೇಶಗಳು ಸುರಕ್ಷಿತ ಎನ್ನುವ ಭಾವನೆ ಒಂದು ಭ್ರಮೆ ಅಷ್ಟೇ.

ಸಾಹಿತ್ಯ, ಕವಿತೆಗಳಲ್ಲಿ, ಸಿನಿಮಾಗಳಲ್ಲಿ ಮುಕ್ತತೆಯನ್ನು ಬಯಸುವ ನಾವು ನಮ್ಮ ಯುವಜನರ ನಡತೆಗೆ ಏಕೆ ಕಡಿವಾಣ ತೊಡಿಸಬೇಕು? ಕಥೆ ಕಾದಂಬರಿ, ಜಾಹೀರಾತು, ಸಿನೆಮಾಗಳಲ್ಲಿ ಎಗ್ಗಿಲ್ಲದೆ ಲೈಂಗಿಕತೆ ತುರುಕಿ ಮಜಾ ಕಾಣುವ ಜನ ಅತ್ಯಾಚಾರದಂತಹ ಘಟನೆಗಳು ಸಂಭವಿಸಿದಾಗ ಹೈರಾಣಾಗುವುದಾದರೂ ಏಕೆ ಎನ್ನುವುದೇ ಅರ್ಥವಾಗುವುದಿಲ್ಲ. ಎಲ್ಲೇ ಕಣ್ಣಾಡಿಸಿದರೂ ಲೈಗಿಕತೆ, ನಗ್ನತೆಯ ದರ್ಶನ ವಾದಾಗ ಆಗುವ ಅನಾಹುತಕ್ಕೆ ಸಮಾಜ ಹೊಣೆ ಹೊರಬೇಕು. ಅಥವಾ ಮುಕ್ತತೆ, ಕ್ರಿಯಾಶೀಲತೆ ಹೆಸರಿನಲ್ಲಿ ನಗ್ನತೆ, ಅಶ್ಲೀಲತೆ ಸೆಕ್ಸ್ ಅನ್ನು ವೈಭವೀಕರಿಸುವುದಾದರೆ ಅಂಥ ಚಿತ್ರ ಗಳನ್ನು ನೋಡಿದ ನಂತರ ಉಂಟಾಗುವ ಉದ್ದೀಪನಕ್ಕೂ ಒಂದು ಔಟ್ ಲೆಟ್ ಸಮಾಜ ನಿರ್ಮಿಸಬೇಕು. ನಮ್ಮ ಚಿತ್ರಗಳಲ್ಲಿ ಕಾಣ ಸಿಗುವ ನರ್ತನ ವನ್ನಾದರೂ ನೋಡಿ, ವಾತ್ಸಾಯನನ ಎಲ್ಲಾ ಭಂಗಿಗಳೂ ಒಂದೆರಡು ಹಾಡುಗಳಲ್ಲಿ ಕಾಣಲು ಲಭ್ಯ. ಗಂಡಿನ ಒಳ ಉಡುಪಿನಿಂದ ಹಿಡಿದು ಕಾರಿನ ಟೈರ್ ಗಳ ಜಾಹೀರಾತಿಗೂ ಬೇಕು ಹೆಣ್ಣು. ಒಂದು ಕಡೆ ನಗ್ನತೆಯ ನಗ್ನ ಪ್ರದರ್ಶನ ಮತ್ತೊಂದು ಕಡೆ ಹುಡಗರು ಹುಡುಗಿಯರು ದಾರಿ ತಪ್ಪ ಬಾರದು ಎನ್ನುವ ಕಡಿವಾಣ, ಹೆಣ್ಣಿನ ಕನ್ಯತ್ವ ಕಾಪಾಡಿಕೊಳ್ಳಬೇಕಾದ ಕುರಿತು ವಿಪರೀತ ಕಾಳಜಿ. ಹೆಣ್ಣನ್ನು ಭೋಗದ ವಸ್ತುವನ್ನಾಗಿ ಮಾತ್ರ ಕಾಣಲು ಸಮಾಜ ಉತ್ಸುಕತೆ ತೋರಿಸಿದರೆ ನವ ದೆಹಲಿಯಲ್ಲಿ ನಡೆದಂಥ ಅಮಾನುಷ, ದುರದೃಷ್ಟಕರ ಘಟನೆಗಳಿಗೂ ಸಾಕ್ಷಿ ನಿಲ್ಲಬೇಕಾಗುತ್ತದೆ.

ಸಮಾಜ ಗಂಡಿನ ಪ್ರಾಮುಖ್ಯತೆ ಬಗ್ಗೆ ಅತೀವ ಗಮನ ನೀಡುತ್ತಿರುವುದೂ ಸಹ ಮಹಿಳೆಯ ದಾರುಣ ಅವಸ್ಥೆಗೆ ಮತ್ತೊಂದು ಕಾರಣ. ಹುಟ್ಟುವ ಮಗು ಹೆಣ್ಣು ಎಂದು ಖಾತ್ರಿಯಾದ ಕೂಡಲೇ ಭ್ರೂಣ ಹತ್ಯೆ ಮೂಲಕ ಹೆಣ್ಣು ಮಗಳನ್ನು ಕೊಲೆಗೈಯ್ಯಲು ಹೇಸದ ಸಮಾಜದಿಂದ ಒಳ್ಳೆಯತನವನ್ನು ನಿರೀಕ್ಷಿಸುವುದು ಕಷ್ಟಕರವಾದ ಕೆಲಸವೇ. ಇನ್ನು ಭ್ರೂಣಾವಸ್ಥೆಯಿಂದ ಭಡ್ತಿ ಪಡೆದು ಧರಿತ್ರಿ ಮುಟ್ಟಿದ ಕೂಡಲೇ ತನ್ನ ಹುಟ್ಟನ್ನು ಪ್ರಪಂಚಕ್ಕೆ ತಿಳಿಸಲು ತಂದೆ ತಾಯಿಗಳಿಗೂ, ಆ ಶುಭ ವಾರ್ತೆಯನ್ನು ಕೇಳುವ ಜನರಿಗೂ ಒಂದು ತೆರನಾದ ಸಂಕಟ… ಅಯ್ಯೋ, ಹೆಣ್ಣಾ? ಹೆಣ್ಣು ಅಬಲೆ, ಹೆಣ್ಣಿನ ಬುದ್ಧಿ ಮೊಣಕಾಲ ಕೆಳಗೆ, ಮುಂತಾದ ಮಾತುಗಳನ್ನು ಕೇಳುತ್ತಾ ಬೆಳೆಯುವ ಗಂಡು ಮಕ್ಕಳಿಗೆ ಹೆಣ್ಣಿನ ಮೇಲೆ ಗೌರವ ತೋರುವುದಾದರೂ ಹೇಗೆ? ಹೆಣ್ಣಿನ ಬುದ್ಧಿ ಮೊಳ ಕಾಲ ಕೆಳಗೆ, ಮುಂತಾದ ಮಾತುಗಳ ಮೂಲಕ ಹೆಣ್ಣಿನ ಅಸ್ತಿತ್ವದ ಕುರಿತು ಕೀಳರಿಮೆ ಬರುವಂಥ ನಡತೆಗಳೂ ಸಹ ಕಾರಣ ಮಹಿಳೆಯ ವಿರುದ್ಧ ನಡೆಯುತ್ತಿರುವ ಹಿಂಸೆ, ಅತ್ಯಾಚಾರ. ಹೆಣ್ಣನ್ನು ದೇವಿ, ‘ಮಾತಾ ಶ್ರೀ’ ಎಂದು ಪೂಜಿಸುವ, ಆದರಿಸುವ ಸಮಾಜವೇ ಸಂದರ್ಭ ಬಂದಾಗ ಮಹಿಳೆ ವಿರುದ್ಧ ಹೇಸಿಗೆ ಹುಟ್ಟಿಸುವ ಕೆಲಸಕ್ಕೂ ಮುಂದಾಗುವುದು ಅರ್ಥವಾಗದ ಒಗಟು. ಮಹಿಳೆಯರ ಮೇಲಿನ ದೌರ್ಜನ್ಯ ಕಂಡು ಬೇಸತ್ತ ಒಬ್ಬ ಮಹಿಳೆ ಹೇಳುವುದು, “ಹೆಣ್ಣು ಮಕ್ಕಳನ್ನು, ಸಂಗೀತ ಕಲಿಯಲಿಕ್ಕೋ, ನೃತ್ಯ ಕಲಿಯಲಿಕ್ಕೋ ಕಳಿಸಬೇಡಿ, ಬದಲಿಗೆ ಕರಾಟೆ, ಜೂಡೋ ಕಲಿಯಲು ಪ್ರೋತ್ಸಾಹಿಸಿ” ಇಂಥ ಮಾತು ಓರ್ವ ಹೆಣ್ಣು ಮಗಳ ಬಾಯಿಂದ ಬರಬೇಕಾದರೆ ಗಂಡಿನ ಕುರಿತ ಆಕೆಯ ಅಪನಂಬಿಕೆ ನಮಗೆ ವೇದ್ಯವಾಗುತ್ತದೆ.

ಬಹುಶಃ ವಿಶ್ವದಲ್ಲೇ ಅತೀ ಹೆಚ್ಚು ಪ್ರಭಾವೀ ಮಹಿಳಾ ರಾಜಕಾರಣಿಗಳು ಇರುವ ದೇಶ ನಮ್ಮದು. ಸರಕಾರವನ್ನು ಮುನ್ನಡೆಸುತ್ತಿರುವ ಮಹಿಳೆಯಿಂದ ಹಿಡಿದು, ವಿರೋಧ ಪಕ್ಷದ ನಾಯಕಿ. ಮುಖ್ಯ ಮಂತ್ರಿ, ಉನ್ನತ ಮಂತ್ರಿ ಪದವಿಗಳನ್ನು ಅಲಂಕರಿಸಿ ಕೂತ ಮಹಿಳೆಯರಿಗೆ ಅವರದೇ ಸಮಸ್ಯೆಗಳ ಅರಿವು ಇಲ್ಲದಿರುವುದು ಆಶ್ಚರ್ಯಕರ. ಇಷ್ಟೊಂದು ಮಹಿಳಾ ರಾಜಕಾರಣಿಗಳು ವಿಜ್ರಂಭಿಸುವ ದೇಶದಲ್ಲೇ ಹೆಣ್ಣಿನ ಪರಿಸ್ಥಿತಿ ಹೀಗಾದರೆ?

ಮಹಿಳೆಯರ ವಿರುದ್ಧ ನಡೆಯುವ ಯಾವುದೇ ಹಿಂಸೆ ಅತ್ಯಚಾರ ಗಳನ್ನು ವ್ಯವಸ್ಥೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ತಕ್ಕ ಶಿಕ್ಷೆ ಯನ್ನು ಫಾಸ್ಟ್ ಟ್ರಾಕ್ ಕೋರ್ಟ್ ಗಳ ಮೂಲಕ ಕೊಡ ಮಾಡಿಸಬೇಕು. ಅತ್ಯಾಚಾರವೆಸಗುವ ಗಂಡಿನ ವಯಸ್ಸಿನ ಮಿತಿಯನ್ನು ಹದಿನೆಂಟರಿಂದ ಹದಿನೈದಕ್ಕೆ ಇಳಿಸಬೇಕು. ನವ ದೆಹಲಿಯಲ್ಲಿ ಅತ್ಯಾಚಾರವೆಸಗಿದ ಪುರುಷರ ಪೈಕಿ ಹದಿನೇಳು ವಯಸ್ಸಿನ ಹುಡುಗನ ಪಾತ್ರ ಅತ್ಯಂತ ಕ್ರೂರವಂತೆ. ಚಿಕ್ಕ ವಯಸ್ಸಿನಲ್ಲೇ ಹಡಬೆ ಕೆಲಸಕ್ಕೆ ಕೈ ಹಚ್ಚುತ್ತಿರುವ ಸಮೂಹಕ್ಕೆ ಶಿಕ್ಷೆಗೆ ಅವಶ್ಯವಾದ ಪರಿಮಿತಿಯನ್ನು ಕೆಳಕ್ಕಿಳಿಸಿದಾಗಲೇ ಇತರರಿಗೆ ಎಚ್ಚರಿಕೆಯ ಘಂಟೆ. ಅತ್ಯಾಚಾರಿಗೆ ನೇಣಿನ ಶಿಕ್ಷೆಯನ್ನಲ್ಲದೆ ಬೇರಾವುದೇ ಶಿಕ್ಷೆಗೂ ಒಳಪಡಿಸಬಾರದು. ಏಕೆಂದರೆ, ಮಹಿಳೆಯ ವಿರುದ್ಧ ನಡೆಯುವ ಅತ್ಯಾಚಾರ ಒಂದು ರೀತಿಯ crime against humanity.

pic courtesy: http://www.womenundersiege.org

 

ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು

ಕಣ್ಣಿಗೆ ಕಣ್ಣು, ಹಲ್ಲಿಗೆ, ಹಲ್ಲು – ಕ್ರೈಸ್ತ ಧರ್ಮದ “ಹಳೇ ಒಡಂಬಡಿಕೆ” ಯ ಈ ಮಾತುಗಳು ಇಸ್ಲಾಮಿನ ಶರಿಯಾ ಕಾನೂನಿನಲ್ಲೂ ಶಿಫಾರಸು ಮಾಡಲಾಗಿದೆ. ಒಂದು ರೀತಿಯ ಸೇಡಿಗೆ ಸೇಡು. ಆದರೆ ಇದನ್ನು ತಪ್ಪು ಎನ್ನುವವರೂ ಕೆಲವೊಮ್ಮೆ ಘಟನೆಗಳ, ಅಪರಾಧಗಳ ಕ್ರೌರ್ಯದ ಗಂಭೀರತೆಯನ್ನು ಗಮನದಲ್ಲಿಟ್ಟು ಕೊಂಡು ಈ ರೀತಿಯ retributory justice ವಿಧಾನ ಸರಿ ಎಂದು ವಾದಿಸುವರು.   

ಕಣ್ಣಿಗೆ ಕಣ್ಣು ಬೇಕು ಎನ್ನುವವರು ಒಂದು ಕಡೆಯಾದರೆ ಮಾನವೀಯ ದೃಷ್ಟಿಯಿಂದ ದೃಷ್ಟಿಯನ್ನು ಬೇರೆಡೆ ಹೊರಳಿಸಬೇಕು ಎನ್ನುವವರು ಮತ್ತೊಂದು ಕಡೆ. ಪ್ರತೀಕಾರ ಮಾನವ ಸಹಜ ಗುಣ. ಪುಟ್ಟ ಮಕ್ಕಳ ಪ್ರತಿಕ್ರಿಯೆಗಳೂ ಈ  ಮಾನವ ಸಹಜ ಗುಣಕ್ಕೆ ಅನುಗುಣವಾಗಿಯೇ ಇರುವುದನ್ನು ಗಮನಿಸಿದ್ದೇವೆ. ಕ್ಷಮಿಸುವವನು ಉದಾರಿ, ಆ ಗುಣ ಎಲ್ಲರಿಗೂ ಬರಬೇಕೆಂದಿಲ್ಲ. ಸಮಾಜ ಶಿಕ್ಷೆಯನ್ನು ಪ್ರತೀಕಾರ ಎನ್ನುವ ದೃಷ್ಟಿಯಿಂದ ನೋಡಬಾರದು, ಹಾಗೆ ನೋಡಿದಾಗ ಒಸಮಾ ಬಿನ್ ಲಾದೆನ್ ನ ವಧೆಯೂ ಸಮ್ಮತವೆನ್ನಿಸದು. ಒಸಾಮಾ ನ ವಧೆ ಸರಿ ಎಂದು ನಾಗರೀಕ ಸಮಾಜ ಖಂಡಿತವಾಗಿ ಒಪ್ಪುತ್ತದೆ. ಕೆಲವರು ಅವನನ್ನು ವಿಚಾರಣೆಗೆ ಒಳಪಡಿಸಿ ಶಿಕ್ಷಿಸಬೇಕಿತ್ತು ಎನ್ನುವವರೂ ಇದ್ದಾರೆ. ಆದರೆ ಆತನನ್ನು ಹಿಡಿದು ವಿಚಾರಣೆಗೆ ಒಳಪಡಿಸಲು ಮಾಡಿ ಕೊಳ್ಳ ಬೇಕಾದ ಸಿದ್ಧತೆಗಳನ್ನು ನೋಡಿದಾಗ, ಅದರ ಎಡರು ತೊಡರು ಗಳನ್ನು, ಗಮನಕ್ಕೆ ತೆಗೆದು ಕೊಂಡಾಗ targeted elemination ಹೆಚ್ಚು ಪ್ರಾಯೋಗಿಕ ಎಂದು ತೋರುತ್ತದೆ.  

ಪ್ರತಿಭಾವಂತಳಾದ ಇಂಜಿನಿಯರಿಂಗ್ ಪದವೀಧರೆಯಾದ ಇರಾನಿನ ಯುವತಿ ಅಮೀನ ಬೆಹ್ರಾಮಿಯ ಜೀವನ ಸಂಪೂರ್ಣವಾಗಿ ನಾಶವಾಗಿ ಹೋಯಿತು, ತನ್ನನ್ನು ಬಯಸಿದ ಮಾಜಿದ್ ಮೋವಾಹೆದಿ ಎನ್ನುವ ನರ ರಾಕ್ಷಸನಿಂದ. ಆಮಿನಾಳನ್ನು ವಿವಾಹವಾಗಲು ಬಯಸಿದ್ದ ಮಾಜಿದ್ ಈಕೆಯ ಅಸಮ್ಮತಿಯಿಂದ ಕ್ರುದ್ಧನಾದ. ನನ್ನನ್ನು ಮದುವೆಯಾಗದಿದ್ದರೆ ಕೊಲ್ಲುತ್ತೇನೆ ಎಂದು ಮೊದಲಿಗೆ ಬೆದರಿಸಿದ್ದ ಇವನು ಮನಸ್ಸು ಬದಲಿಸಿ ನನಗೆ ಸಿಗದ ಇವಳು ಬೇರಾರಿಗೂ ಸಿಗಕೂಡದು ಎಂದು ತೀರ್ಮಾನಿಸಿದ . ಒಂದು ಬಕೆಟ್ ತುಂಬಾ ಆಸಿಡ್ ಅನ್ನು ಅಮೀನಾಳ ಮುಖದ ಮೇಲೆ ಎರಚಿದ. ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡ ಈಕೆ ಭಯ ಹುಟ್ಟಿಸುವಂಥ ಕುರೂಪಿಯಾದಳು.  ಇರಾನಿನ ನ್ಯಾಯಾಲಯ ದಂಡವನ್ನೂ ಸೆರೆವಾಸದ ಶಿಕ್ಷೆಯನ್ನೂ ವಿಧಿಸಿತು ಮಾಜಿದ್ ನಿಗೆ. ಈ ತೀರ್ಪಿಗೆ ಅಮೀನ ಸಮ್ಮತಿಸಲಿಲ್ಲ. ನನ್ನ ನೋವನ್ನು  ಸ್ವತಃ ತನ್ನ ಕಣ್ಣು ಗಳನ್ನು ಕಳೆದು ಕೊಳ್ಳುವ ಮೂಲಕ ಮಾತ್ರ ಮಾಜಿದ್ ಅರಿಯಬಲ್ಲ ಎಂದು ವಾದಿಸಿದಳು. ಇದೇ ೧೪ ಮೇ, ೨೦೧೧ ರಂದು ಆಕೆಗೆ ಸಿಕ್ಕಿತು ಬಯಸಿದ ನ್ಯಾಯ. ಹತ್ತಿರದ ಆಸ್ಪತ್ರೆಗೆ ಮಾಜಿದ್ ನನ್ನು ದಾಖಲಿಸಿ ಅವನಿಗೆ ಅರಿವಳಿಕೆ ಕೊಟ್ಟು ಅವನ ಕಣ್ಣುಗಳಲ್ಲಿ ಆಸಿಡ್ ಪ್ರೋಕ್ಷಣೆ ಮಾಡಲು ತೀರ್ಮಾನ ವಾಯಿತು. ಈಗ ಆಗಮನವಾಯಿತು “ಕರುಣಾನಿಧಿ” ಜನರ ದಂಡು. amnesty international ನೇತೃತ್ವದ ಈ ದಂಡು ಹೇಳಿದ್ದು ಈ ರೀತಿ ನ್ಯಾಯ “ ಕಿರುಕುಳಕ್ಕೆ ಸಮಾನ” ಎಂದು. ಕ್ರೂರ ಮಾಜಿದ್ ಎಸಗಿದ ಕೃತ್ಯಕ್ಕೆ ಯಾವ ರೀತಿಯ ವಿಶ್ಲೇಷಣೆ ಕೊಡುತ್ತದೋ ಅಮ್ನೆಸ್ಟಿ. ಪಾಶ್ಚಾತ್ಯರ ಯಾವುದೇ ಮಾತಿಗೂ ಒಲ್ಲೆ ಎಂದು ಹೇಳಿ ಸುಖ ಅನುಭವಿಸುವ ಇರಾನ್ amnesty ಯ ಮಾತಿಗೆ ತಲೆ ಬಾಗಿತು. ಆದರೆ ಅಮೀನಾ ಮಾತ್ರ ತನ್ನ ಹೊರಾಟವನ್ನು ಖಂಡಿತಾ ಮುಂದುವರೆಸುವಳು. ಕಣ್ಣಿಗೆ ಕಣ್ಣು, ಈ ನ್ಯಾಯದಿಂದ ಮಾತ್ರ ಈಕೆ ತೃಪ್ತಳಾಗುವಳು. ಈ ತೆರನಾದ ನ್ಯಾಯದಿಂದ ಭಾವೀ ರಾಕ್ಷಸರು ಪಾಠ ಕಲಿಯಬೇಕು.          

ಗಾಂಧೀಜಿ ಪ್ರಕಾರ ಕಣ್ಣಿಗೆ ಕಣ್ಣು ಎನ್ನುವ ಪ್ರತೀಕಾರದ ಶಿಕ್ಷೆಯಿಂದ ಪ್ರಪಂಚವೇ ಕುರುಡಾಗಬಹುದು. ಇಡೀ ಪ್ರಪಂಚವೇ ಅನೈತಿಕತೆ, ಅನ್ಯಾಯ, ಹಿಂಸೆ ಎಸಗುವ ಕಣ್ಣಾಗುವುದಾದರೆ ಅದು ಕುರುಡಾಗಿರುವುದೇ ಹೆಚ್ಚು ಲೇಸು. ಇಲ್ಲದಿದ್ದರೆ ಪ್ರಪಂಚವೇ ಕುರೂಪಗೊಳ್ಳುವ ಸಾಧ್ಯತೆ ಹೆಚ್ಚು. ಗಾಂಧೀಜಿಯ ಈ ಮಾತಿಗೆ ನಾವು ಸಮ್ಮತಿಸಿದರೆ ಅವರನ್ನು ವಧಿಸಿದ ದ್ರೋಹಿಯನ್ನು ದೇಶ ಸುಮ್ಮನೆ ಬಿಡಬೇಕಿತ್ತು. ಯೋಚಿಸಿ ನೋಡಿ, ಮೈ ಝುಮ್ಮೆನ್ನುವುದಿಲ್ಲವೇ?  ಕೆಲವೊಂದು ಮಾತುಗಳು ಎಲ್ಲಾ ಕಾಲಕ್ಕೂ ಉದ್ಧರಿಸಲು ಉಪಯೋಗಕ್ಕೆ ಬರಬಹುದು, ದಯೆಯ ಆ ಮಾತುಗಳನ್ನು ಭಾಷಣಗಳಲ್ಲೂ, ಬರಹಗಳಲ್ಲೂ ಉಪಯೋಗಿಸಲು ಸುಂದರವಾಗಬಹುದು. quote ರೂಪದಲ್ಲಿ ಆಕರ್ಷಕ ಈ ಹೇಳಿಕೆಗಳು. ಆದರೆ ಸಮಾಜದ ಸ್ವಾಸ್ಥ್ಯವನ್ನೂ, ಹಿತವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡಾಗ ಮಾಜಿದ್ ನಂಥ ದುರುಳರ ಕಣ್ಣುಗಳನ್ನು ಕೀಳಲೇಬೇಕು. ಮುಗ್ಧ, ಅಮಾಯಕ ಹೆಣ್ಣಿನ ಕಣ್ಣುಗಳನ್ನು ಕಿತ್ತ ಅವನ ಕಣ್ಣುಗಳು ತನ್ನ ಕ್ರೌರ್ಯವನ್ನು ಕಂಡು ಹಿಗ್ಗಬಾರದು. ಅಂತಾರಾಷ್ಟ್ರೀಯ ಒತ್ತಡಕ್ಕೆ ಇರಾನ್ ತಲೆಬಾಗದೆ ಆಕೆ ಬಯಸಿದ ನ್ಯಾಯವವನ್ನು ಅವಳಿಗೆ ದಯಪಾಲಿಸಲೇಬೇಕು.  

ಹಿಂಸೆಗೆ ಪ್ರತಿ ಹಿಂಸೆಯಾಗಿ ಅಸ್ತ್ರ ದ ಪ್ರಯೋಗ ನಡೆಯದಿದ್ದರೆ ಪ್ರಪಂಚ ಸುರಕ್ಷಿತ ಸ್ಥಳವಲ್ಲ. ಸ್ಪೇನ್ ದೇಶದ ದ್ವೀಪವೊಂದರ ಪ್ರವಾಸದಲ್ಲಿದ್ದ ಇಂಗ್ಲೆಂಡಿನ ಮಧ್ಯ ವಯಸ್ಕ ಮಹಿಳೆಯೊಬ್ಬರನ್ನು ಯಾವುದೇ ಕಾರಣವಿಲ್ಲದೆ ಓರ್ವ ಯುವಕ ೧೫ ಬಾರಿ ಚಾಕುವಿನಿಂದ ಇರಿದದ್ದು ಸಾಲದು ಎಂದು ಆಕೆಯ ರುಂಡಚ್ಛೇದ ಮಾಡಿ ರಸ್ತೆ ಬದಿಗೆ ಎಸೆದ. ಈ ಮಹಿಳೆ ಪ್ರವಾಸದ ವೇಳೆ ಅಲ್ಲಿನ ಶಾಲೆಯ ಮಕ್ಕಳಿಗೆ ರಸ್ತೆ ಸುರಕ್ಷತೆ ಬಗ್ಗೆ ಪಾಠ ಹೇಳಿ ಕೊಡುತ್ತಿದ್ದಳಂತೆ. ಇಂಥ ಹಿಂಸ್ರ ಪಶುಗಳನ್ನು ಸಮಾಜ ಸಹಿಸಿದಾಗ, ಅವರಿಗೆ ತಕ್ಕ ಶಿಕ್ಷೆ ಕೊಡುವಲ್ಲಿ ವಿಫಲವಾದಾಗ ಇಂಥ ಕರುಳು ಹಿಂಡುವ ಘಟನೆಗಳು ಎಲ್ಲೆಲ್ಲೂ ಕಾಣಲು ಸಿಗುತ್ತವೆ. ಕೊಲೆಗಾರ ಒಂದೆರಡು ವರ್ಷ ಜೇಲಿನಲ್ಲಿ ಕಳೆದು ಸಮಾಜಕ್ಕೆ ಮರಳಿ ಬರುತ್ತಾನೆ ತನ್ನ ಮಿಕವನ್ನು ಅರಸುತ್ತಾ.

ನಾವು “ಅಕಶೇರುಕ” ರಾಗಿದ್ದು ಎಂದಿನಿಂದ?

ಪಾಕಿಸ್ತಾನ ಅಮೆರಿಕೆಯ ಒಂದು ಪಪ್ಪೆಟ್. ಇದು ಪಾಕಿಸ್ತಾನದ ಸರಕಾರಕ್ಕಿಂತ ಅಲ್ಲಿನ ಜನಕ್ಕೆ ಚೆನ್ನಾಗಿ ಗೊತ್ತು. ತಮ್ಮ ಸರಕಾರಗಳು ಪ್ರತೀ ನಿರ್ಧಾರಕ್ಕೂ ವಾಷಿಂಗ್ಟನ್ ಮೇಲೆ ಪರಾವಲಂಬಿ ರೀತಿ ಅವಲಂಬಿತ ಎಂದು.  ಪಾಕಿಸ್ತಾನ ಒಂದು miserably failed state, ಪಾಕಿಸ್ತಾನದ ಈ degenaration ನೋಡಿ ಕನಿಕರ ಪಡುತ್ತಿದ್ದ ನಮಗೆ ಒಂದು ವಿಚಿತ್ರ ಆದರೆ  ಆಘಾತಕಾರಿಯಾದ ಬೆಳವಣಿಗೆ ಕಾಣಲು ಸಿಕ್ಕಿದೆ. ಒಂದು ಬೆಳಿಗ್ಗೆ ಅಮೆರಿಕೆಯ ದೂತಾವಾಸದ ಸಿಬ್ಬಂದಿಯೊಬ್ಬ ರಸ್ತೆ ಬದಿಯಲ್ಲಿ ನಿಂತಿದ್ದಾಗ ಬೈಕ್ ಬಂದು ನಿಲ್ಲುತ್ತದೆ, ಗುಂಡಿನ ಚಕಮಕಿ ನಡೆಯುತ್ತದೆ, ಬೈಕ್ ಸವಾರರಲ್ಲಿ ಇಬ್ಬರು ಸಾಯುತ್ತಾರೆ ಅಮೆರಿಕೆಯವನನ್ನು ಪೊಲೀಸರು ಬಂಧಿಸುತ್ತಾರೆ. ಪಾಕ್ ಬೀದಿಗಳಲ್ಲಿ  ಬೈಕ್ ನಲ್ಲಿ ಬರುವುದೂ, ಬಂದ ಕೂಡಲೇ ಗುಂಡಿನ ಕಾಳಗ ನಡೆಯುವುದೂ ಸಾಮಾನ್ಯವೇ. ನಾವು ನಮ್ಮ ಚಿತ್ರಗಳಲ್ಲಿ ಕಾಣುವುದನ್ನು ಅಲ್ಲಿ ನಿಜ ಜೀವನದಲ್ಲಿ ಆಡಿ ತೋರಿಸುತ್ತಾರೆ. ಆದರೆ ವಿಷಯದ ಗಾಂಭೀರ್ಯ ಇರುವುದು ಅಮೆರಿಕೆಯವ ಈ ವಿವಾದದಲ್ಲಿ ಸಿಕ್ಕಿ ಬಿದ್ದಿದ್ದು. ಅದೂ ಸಾಧಾರಣ ಅಮೆರಿಕೆಯ ನಾಗರೀಕನಲ್ಲ. ದೂತಾವಾಸದ ಸಿಬ್ಬಂದಿ. ಅವನಿಗೆ ಇದ್ದೇ ಇರುತ್ತದೆ diplomatic immunity. ತನ್ನ ದೇಶದವರು ಸಿಕ್ಕಿಬಿದ್ದಾಗ ಸಹಜವಾಗಿಯೇ ಅಮೆರಿಕನ್ನರು ಕಿಡಿ ಕಿಡಿ ಯಾಗುತ್ತಾರೆ. ಈ ವಿಷಯದಲ್ಲೂ ಸಹ ಅಸಮಾಧಾನ ಗೊಂಡರು. ಮಾಮೂಲಿ ಪ್ರತಿಭಟನೆ ಕೆಲಸ ಮಾಡದಾದಾಗ ಅಮೆರಿಕೆಯಲ್ಲಿನ ಪಾಕ ರಾಜತಾಂತ್ರಿಕ ನನ್ನು ಕರೆಸಿ ನಮ್ಮ ಪ್ರಜೆಯನ್ನು ವಿಮುಕ್ತಿಗೊಳಿಸದಿದ್ದರೆ ನಿನ್ನನ್ನು ಒದ್ದೋಡಿಸುತ್ತೇವೆ ಎಂದು ಧಮಕಿ ಹಾಕಿದರು. ಧಮಕಿ ಕೇಳಿ ಮರಳಿದ ಆತ ನನಗೆ ಅಂಥ ಎಚ್ಹರಿಕೆಯನ್ನೇನೂ ಅಮೇರಿಕಾ ನೀಡಿಲ್ಲ ಎಂದು ಟ್ವೀಟಿಸಿ ಸುಮ್ಮನಾದ. ಆದರೆ ಅಮೇರಿಕ ನೇರವಾಗಿ ಅಲ್ಲಿನ ಸರಕಾರದ ಮೇಲೆ ಪ್ರಭಾವ ತೋರಿಸಲು ತೊಡಗಿತು. ಅಲ್ಲಿನ ಪೊಲೀಸರು ಮಾತ್ರ ಜಪ್ಪಯ್ಯ ಎನ್ನಲಿಲ್ಲ. ಇವನು ದೂತಾವಾಸದ ಅಧಿಕಾರಿ ಅಲ್ಲ, ಬದಲಿಗೆ ಒಬ್ಬ ಗೂಢಚಾರ ಎಂದು ಕರೆದು ಅವನ ಬಳಿಯಿದ್ದ ಆಧುನಿಕ ಉಪಕರಣಗಳ ಹೆಸರುಗಳನ್ನೂ ಪಟ್ಟಿ ಮಾಡಿ ಬಹಿರಂಗಗೊಳಿಸಿದರು, charge sheet ಹಾಕಿ ಅತ್ತೆ ಮನೆಗೂ ಸಹ ಅಟ್ಟಿದರು. ಈ ಘಟನೆ ನಮ್ಮ ದೇಶದಲ್ಲಿ ನಡೆದಿದ್ದರೆ? ಪಾಕಿಸ್ತಾನದ ಗಾಯಕ ಕೋಟ್ಯಂತರ ರೂಪಾಯಿ ಅನಧಿಕೃತವಾಗಿ  ತಂದ ಎಂದು ಬಂಧಿಸಿದ ಕೂಡಲೇ ಅವನನ್ನು ಬಿಡುಗಡೆ ಗೊಳಿಸಲು ಆದೇಶ.   

ಪ್ರಥಮ ಕೊಲ್ಲಿ ಯುದ್ಧದ ವೇಳೆ ಅಮೆರಿಕೆಯ ಯುದ್ಧ ವಿಮಾನಗಳಿಗೆ ಇಂಧನ ಹಾಕಬಾರದು ಎಂದು ನಿರ್ಣಯಿಸಿದ್ದ ನಮ್ಮ  ಸರಕಾರ ಕೊನೆಗೆ ಸದ್ದಿಲ್ಲದೇ ಇಂಧನ ತುಂಬಿಸಿ ಕೊಟ್ಟಿತು. ಬಿಳಿ ನಗು ನಮ್ಮ ಮೇಲೆ ಚೆನ್ನಾಗಿ ಪ್ರಭಾವ ಬೀರುತ್ತದೆ. ಈ ಪಾಠವನ್ನು ಅಮೆರಿಕನ್ನರಿಗೆ ನೀಡಿದ್ದು ನಮ್ಮನ್ನು ೨೦೦ ವರ್ಷ ಗಳ ಕಾಲ ಆಳಿದ ಬ್ರಿಟಿಷರು. ಇರಾನ್ ನಮ್ಮ ದೇಶದ ಆಪ್ತ ಮಿತ್ರ. ಆದರೆ ಇರಾನ ವಿರುದ್ಧದ ಭದ್ರತಾ ಮಂಡಳಿಯ ನಿರ್ಣಯಕ್ಕೆ ಪರವಾಗಿ ನಾವು ಮತ ಚಲಾಯಿಸಿ ಮಧ್ಯ ಪ್ರಾಚ್ಯದಲ್ಲಿನ ಒಂದು ದೇಶದ ಬೆಂಬಲವನ್ನು ಕಳೆದು ಕೊಂಡೆವು.

ಕೇಂದ್ರ ಸರಕಾರದಲ್ಲಿ ಕೆಲಸ ಮಾಡದ ಅಥವಾ ಮಾಡಲು ಬಾರದ ಒಂದು ಇಲಾಖೆ ಇದ್ದರೆ ಅದೇ ವಿದೇಶಾಂಗ ಇಲಾಖೆ. ವಿದೇಶಾಂಗ ಇಲಾಖೆಯಲ್ಲಿ ಕೆಲಸ ಎಂದರೆ ಗರಿ ಗರಿಯಾದ ಸೂಟು, ಅಥವಾ ರೇಶಿಮೆ ಸೀರೆ ಉಟ್ಟು ದೇಶ ಸುತ್ತುವುದು ಎನ್ನುವ ತಪ್ಪು ಕಲ್ಪನೆ ಮನೆ ಮಾಡಿದೆ. ನೆಹರೂ ಕಾಲಾದ outdated ರಾಜನೀತಿಯ ನಿಯಮಗಳು ಎಲ್ಲಾ ಕಾಲಕ್ಕೂ ಪ್ರಸ್ತುತ ಎನ್ನುವ ಭಾವನೆ ಬೇರೆ. ನಾವು ಯಾರ ಪರವೂ ಅಲ್ಲ, ಎಲ್ಲರ ಸವಾರಿ ನಮ್ಮ ಮೇಲೆ ನಡೆಯಲಿ ಎನ್ನುವ ನಿರ್ಲಿಪ್ತ ನೀತಿಯ ಮೇಲೆ ವಿಪರೀತ ಅವಲಂಬನೆ. ಆ ನೀತಿಗೆ ಒಂದೇ ಒಂದು ಬದಲಾವಣೆಯಂತೂ ಕಾಣಲು ಸಿಕ್ಕಿದೆ. ಅದೇ ಅಮೇರಿಕಾ ಪರ ನೀತಿ. ಹಿಂದೆ ರಷ್ಯಾ ಪರ, ಈಗ ಅಮೇರಿಕಾ ಪರ. ನಮಗೇಕೆ ಸ್ವಂತಿಕೆ ಇಲ್ಲ ಅಥವಾ ಇರಕೂಡದು? ವಿನಾಕಾರಣ ಕಾರ್ಗಿಲ್ ಅನ್ನು ಆಕ್ರಮಿಸಿ ನಮ್ಮ ಸಾವಿರಾರು ಸೈನಿಕರ ಸಾವಿಗೆ ಕಾರಣವಾದ ಪಾಕಿಸ್ತಾನವನ್ನು ಸದೆ ಬಡಿಯುವ ಸುಂದರ, ಬಹುಶಃ ಇನ್ನೆಂದೂ ಬರದ ಅವಕಾಶವನ್ನು ನಾವು ಕಳೆದು ಕೊಂಡೆವು. ಇದಕ್ಕೆ ಕಾರಣ ನಮಗೆ ಅಮೇರಿಕೆಯಿಂದ ಬಂದ ಮನವಿ. ಅವರಿಗೆ ಬೇಕಾದಾಗ ಮನವಿ, ಅಥವಾ ಬೆದರಿಕೆ. ಈ ಎರಡರಲ್ಲಿ ಒಂದನ್ನು ಕೊಟ್ಟು ಅಮೇರಿಕಾ ತನ್ನ ಕೆಲಸವನ್ನೂ ಸಾಧಿಸಿ ಕೊಳ್ಳುತ್ತದೆ.

೨೦೦೧ ಸೆಪ್ಟೆಂಬರ್ ತಿಂಗಳಿನಲ್ಲಿ ಅಮೆರಿಕೆಯ ಮೇಲೆ ನಡೆದ ಧಾಳಿಗೆ ತತ್ತರಿಸಿ ಪ್ರಪಂಚದ ಎಲ್ಲ ದೇಶಗಳಿಂದ ಮುಚ್ಚಳಿಕೆ ಬರೆಸಿ ಕೊಂಡಿತು ಅಮೇರಿಕಾ. ಭಯೋತ್ಪಾದಕರು, ಅದಕ್ಕೆ ಧನ ಸಹಾಯ ನೀಡುವವರು ಯಾರದೇ ನೆಲದ ಮೇಲೆ ಇದ್ದರೋ ಅಮೆರಿಕೆಯ ಸುಪರ್ದಿಗೆ ಒಪ್ಪಿಸತಕ್ಕದ್ದು ಎನ್ನುವುದು ಮುಚ್ಚಳಿಕೆ. ವಿಧೇಯರಾಗಿ ಎಲ್ಲಾ ದೇಶಗಳೂ ತಲೆ ಬಾಗಿದವು. ನಮ್ಮ ದೇಶದ ಗಡಿ ನುಗ್ಗಿ ಒಂದು ನಗರವನ್ನು ತನ್ನ ಹಿಂಸೆಯಿಂದ ತತ್ತರಿಸುವಂತೆ ಮಾಡಿದ ಪಾಕ ಬಗ್ಗೆ ಮಾತ್ರ ಬೇರೆಯೇ ತೆರನಾದ ನಿಲುವು. ಉಗ್ರವಾಗಿ ಪ್ರತಿಭಟಿಸಿದಾಗ ಅಲ್ಲಿಂದ ಧಾವಿಸಿ ಬಂದ ವಿದೇಶಾಂಗ ಕಾರ್ಯದರ್ಶಿ ಕ್ಲಿಂಟನ್ ಒಂದ್ರೆಅದು ಮೊಂಬತ್ತಿ ಗಳನ್ನು ಹಚ್ಚಿ, ಎರಡು ನಿಮಿಷ ಮೌನ ಆಚರಿಸಿ ಸಮಾಧಾನ ಮಾಡಿ ಹೋದರು. ಮುಂಬೈ ಮೇಲಿನ ಆಕ್ರಮಣದ ವೇಳೆಯೂ ಭಾರತಕ್ಕೆ ಒಂದು ಸುವರ್ಣಾವಕಾಶ ಇತ್ತು ಪಾಕಿಗೆ ಒಂದು “ಝಟ್ಕಾ” ನೀಡಲು. ಅಲ್ಲೂ ಬಿಳಿ ನಗೆ ನಮ್ಮ priority ಮರೆಯುವಂತೆ ಮಾಡಿತು. ಬಿಳಿ ನಗುವಿನ ಮಾಯೆ ಅಂಥದ್ದು.     

ನಮ್ಮ ರಕ್ಷಣಾ ಸಚಿವ (ಜಾರ್ಜ್ ಫೆರ್ನಾಂಡಿಸ್) ರನ್ನು ಬೆತ್ತಲೆ ಮಾಡಿ ಅಮೆರಿಕೆಯ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿದಾಗ ಅದು ದೊಡ್ಡ ವಿಷಯವಲ್ಲ ನಂಗೆ. ಮೆಚ್ಚುಗೆ, ಅಬ್ಬಾ, ಎಂಥ ಭದ್ರತಾ ವ್ಯವಸ್ಥೆ ಅವರದು. ನಮ್ಮ ರಾಷ್ಟ್ರಪತಿ ಕಲಾಂ ರನ್ನು ವಿಮಾನ ನಿಲ್ದಾಣ ದಲ್ಲಿ ಅನುಚಿತವಾಗಿ ವರ್ತಿಸಿದಾಗಲೂ ನಿರ್ಲಿಪ್ತತೆ. ನಮ್ಮ ವಿದ್ಯಾರ್ಥಿಗಳನ್ನು ಅಲ್ಲಿನ ವಿದ್ಯಾಲಯವೊಂದು ಮೋಸ ಮಾಡಿ ನಂತರ ವಿದ್ಯಾರ್ಥಿಗಳು ಓಡಿ ಹೋಗದಂತೆ electronic tag ಅವರ ಕಾಲಿಗೆ ಕಟ್ಟಿ ಅವರ ಮೇಲೆ ನಿರಂತರ ನಿಗಾ ಇಟ್ಟಾಗಲೂ ನಮಗೆ ಅಮೆರಿಕೆಯ ನಡವಳಿಕೆ ಅಸಹನೀಯವಾಗಿ ತೋರುವುದಿಲ್ಲ. ಇನ್ನು ನಮಗೆ ತಿಳಿಯದ ಇನ್ಯಾವ್ಯಾವ ರೀತಿಯಲ್ಲಿ ನಮ್ಮ ಮೇಲೆ ಸವಾರಿ ಮಾಡುತ್ತಿದೆಯೋ ದೇವರೇ ಬಲ್ಲ. ನಮ್ಮ ಸರಕಾರ ಗಳನ್ನು ನಡೆಸಲು ಮಂತ್ರಿಗಳು, ಕಾರ್ಯದರ್ಶಿಗಳು ಎಲ್ಲಾ ಅರವತ್ತು, ಎಪ್ಪತ್ತು ವಯಸ್ಸು ದಾಟಲೇ ಬೇಕು. ಒಂದೆರಡು ಅಪವಾದಗಳನ್ನು ಬಿಟ್ಟರೆ ವಯೋವೃದ್ಧರ ಕಾರುಬಾರು. ಅವರಿಗೆ ರೋಷ ಎಲ್ಲಿಂದ ತಾನೇ ಬರಬೇಕು.   

ಈಗಿನ ವಿಶ್ವ bi-polar ಆಗಬೇಕಿಲ್ಲ. ಪ್ರಪಂಚದ ತುಂಬಾ ದೊಡ್ಡದು. ಹಳೇ ಕಾಲದ ರೀತಿಯ ರಾಜಕಾರಣವನ್ನು ಅಲ್ಲ ನಾವು ಕಾಣುತ್ತಿರುವುದು. ಪಕ್ಕದ ಚೀನಾ ಅತ್ಯಾಧುನಿಕ ಆಯುಧಗಳನ್ನು ಶೇಖರಿಸುತ್ತಿದೆ ಎಂದು ನಮ್ಮ ಗೃಹ ಮಂತ್ರಿ ಕಳವಳ ವ್ಯಕ್ತ ಪಡಿಸಿದರು. ಅವರ ಮನೆಯೊಳಗೇ ಕೂತು ಅವರೇನಾದರೂ ಮಾಡಿಕೊಳ್ಳಲಿ. ನಮಗೇಕೆ ಅವರ ಉಸಾಬರಿ? 3G ಸ್ಕ್ಯಾಮು ಮತ್ತು ಸ್ವಿಸ್ ಮತ್ತು ಇತರೆ ಬ್ಯಾಂಕುಗಳಲ್ಲಿ ನಮ್ಮ ಜನ ಹುಗಿದಿಟ್ಟಿರುವ ಸಂಪತ್ತನ್ನು ಉಪಯೋಗಿಸಿ ನಮ್ಮ ಸೈನ್ಯವನ್ನೂ ಬಲ ಗೊಳಿಸಲಿ. ಭಾರತದ ನೇತೃತ್ವದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಧ್ರುವೀಕರಣ ನಡೆಯಲಿ. ನಮ್ಮೊಂದಿಗೆ ಹೆಜ್ಜೆ ಹಾಕಲು ಲ್ಯಾಟಿನ್ ಅಮೆರಿಕೆಯಲ್ಲೂ, ಮಧ್ಯ ಪ್ರಾಚ್ಯದೇಶ ಗಳಲ್ಲೂ, ಆಫ್ಫ್ರಿಕಾ ಖಂಡದಲ್ಲೂ ದೇಶಗಳಿವೆ.