ಜೈಪುರ ಸಾಹಿತ್ಯ ಮೇಳ

• ಜೈಪುರ ಸಾಹಿತ್ಯ ಮೇಳ ಪ್ರಸಿದ್ಧಿ ಪಡೆದ ಸಾಹಿತ್ಯಾಸಕ್ತರ ಕೂಟ. ಇಲ್ಲಿ ವಿಶ್ವಾದಾದ್ಯಂತ ಪ್ರಕಾಶಿತವಾದ ಪುಸ್ತಕಗಳ ಅಮೋಘ ಸುಗ್ಗಿ ಮತ್ತು ಹೆಸರಾಂತ ಲೇಖಕರ ಸಮ್ಮಿಲನ. ಪುಸ್ತಕಗಳ Cannes ಎಂದು ಹೇಳಬಹುದು. ಸಾಮಾನ್ಯವಾಗಿ ಇಂಥ ಪುಸ್ತಕ ಮೇಳಗಳು ನೀರಸವಾಗಿ ಶುರುವಾಗಿ ಅಷ್ಟೇ ನೀರಸವಾಗಿ ಮುಗಿದು ಬಿಡುತ್ತವೆ ಕೂಡಾ. ಯಾರೋ ಸಾಹಿತ್ಯ ಪ್ರೇಮಿಗಳು, ಡಿಸ್ಕೌಂಟ್ ಪುಸ್ತಕಕ್ಕಾಗಿ ಆಸೆಯಿಂದ ಬರುವ ಒಂದಿಷ್ಟು ಜನರನ್ನು ಬಿಟ್ಟರೆ ಈ ಉತ್ಸವದ ಮೇಲಿನ ಆಸಕ್ತಿ ಗೌಣ. ಆದರೆ ಈ ಬಾರಿಯ ಮೇಳ ಸ್ವಲ್ಪ ವಿಭಿನ್ನವಾಗಿ ಆರಂಭವಾಗಿ ವಿವಾದದ ಸುಳಿಯಲ್ಲಿ ಸಿಕ್ಕಿ ಕೊಂಡಿತು. ಕಾರಣ ವಿಶ್ವ ಪ್ರಸಿದ್ಧ ಲೇಖಕ, ಕಾದಂಬರಿಕಾರ ಸಲ್ಮಾನ್ ರುಷ್ಡಿ ಈ ಮೇಳಕ್ಕೆ ಆಗಮಿಸುವ ಕಾರ್ಯಕ್ರಮ. ಕಾರ್ಯಕ್ರಮಕ್ಕೆ ರುಶ್ಡಿ ಬರಕೂಡದು ಎಂದು ಕೆಲವು ಮುಸ್ಲಿಂ ಸಂಘಟನೆಗಳು ಹೇಳಿದ್ದೆ ತಡ ರಾಜ್ಯ ಸರಕಾರಗಳು ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಭೂಗತ ಲೋಕದ ಬಾಡಿಗೆ ಹಂತಕರಿಂದ ರುಶ್ಡಿ ಜೀವಕ್ಕೆ ಅಪಾಯವಿದೆ ಎಂದು ರುಶ್ಡಿ ತನ್ನ ಭಾರತ ಪ್ರಯಾಣದ ಟಿಕೆಟ್ ಗಳನ್ನು ಹರಿದು ಹಾಕುವಂತೆ ಮಾಡಿದವು. ಮಾರನೆ ದಿನ ಮತ್ತೊಂದು ಸುದ್ದಿ, ಈ ವಿಷಯ ಮುಂಬೈ ಪೊಲೀಸರಿಗೆ ತಿಳಿದೇ ಇಲ್ಲ. ಎರ್ಡೆಡ್ಲೆ ನಾಕು, ಸಲ್ಮಾನ್ ರುಶ್ಡಿ ಗೆ ಮನವರಿಕೆ ಆಯಿತು ಈ ಸುದ್ದಿ ಸುಳ್ಳೆಂದು, ತನ್ನನ್ನು ಉತ್ಸವದ ಹೊರಗಿಡಲು ಸರಕಾರ ಮಾಡಿದ ಹುನ್ನಾರ ಎಂದು.

ಭಾವನೆಗಳನ್ನ ಘಾಸಿಗೊಳಿಸುವ ಅಧಿಕಾರ ಯಾವ ಲೇಖಕನಿಗೂ ಇರಕೂಡದು. ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ವೈಚಾರಿಕ ಸ್ವೇಚ್ಚಾಚಾರಕ್ಕಿರುವ ಮುಕ್ತ ಪರವಾನಗಿ ಅಲ್ಲ. ಕ್ರಿಯಾಶೀಲತೆಯ ಹೆಸರಿನಲ್ಲಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಸೋಗಿನಲ್ಲಿ ಜನರನ್ನು ಕೆರಳಿಸುವ ಪರಿಪಾಠಕ್ಕೆ ನಾಗರೀಕ ಸಮಾಜ ಮಣೆ ಹಾಕಬಾರದು. ಸ್ವೇಚ್ಚಾಚಾರ ಅರಗಿಸಿಕೊಳ್ಳುವ ಗುಣ ನಮ್ಮ ಉಪಖಂಡದ ಜನತೆಗೆ ಇನ್ನೂ ಬಂದಿಲ್ಲ. ಕಾಲ ಬದಲಾದಾಗ ರುಶ್ಡಿ ಯಂಥವರಿಗೆ ಮನ್ನಣೆ ನೀಡೋಣ, ಅಲ್ಲಿಯತನಕ ಸಂಯಮದಿಂದ ಕಾಲದೊಂದಿಗೆ ಹೆಜ್ಜೆ ಹಾಕೋಣ.

ಹಾಗೆಯೇ ಸಲ್ಮಾನ್ ರುಶ್ಡಿ ಪ್ರಕರಣ ಪ್ರಪಂಚದ ಮೊದಲನೆಯದೂ ಅಲ್ಲ, ಕೊನೆಯದೂ ಅಲ್ಲ.

ಕೆಳಗಿನ ಲಿಂಕ್ ಕ್ಲಿಕ್ಕಿಸಿದರೆ ಪ್ರಪಂಚದಲ್ಲಿ ಇದುವರೆಗೆ ಬಹಿಷ್ಕರಿಸಲ್ಪಟ್ಟ ಕೆಲವು ಪುಸ್ತಕಗಳ ಮಾಹಿತಿ ಇದೆ. • http://www.ala.org/advocacy/banned/frequentlychallenged/challengedclassics/reasonsbanned

ಭಾರತದ ವಿಜಯ

ಕೊನೆಗೂ ಬಂತು ಆ ದಿನ. ಆಂಗ್ಲ ಭಾಷೆಯಲ್ಲಿ D-Day. ತಮಗೆ ನಿರಾಸೆಯಾಗದಿರಲಿ ಎಂದು ಎರಡೂ ಕಡೆಯವರು ಆಶಿಸಿದ, ಬೇಡಿಕೊಂಡ, ಹರಕೆ ಹೊತ್ತು ಕೊಂಡ ದಿನ. ನೂರಾರು ವರ್ಷಗಳ ವಿವಾದಕ್ಕೆ, ವಿಶಾಲವಾದ ಭೂಮಿಯ ಜೊತೆ ನಮ್ಮೆಲ್ಲರನ್ನೂ ಸೃಷ್ಟಿಸಿದ, ಮನುಷ್ಯರಂತೆ ಬದುಕು ಎಂದು ತಾಕೀತಿನೊಂದಿಗೆ ಕಳಿಸಿದ, ಎಲ್ಲರೂ ಆರಾಧಿಸುವ ಪರಮಾತ್ಮನಿಗೆ  ಮಂದಿರವೋ ಮಸೀದಿಯೋ ಎನ್ನುವ ತಕಾರಾರಿಗೆ ಸಿಕ್ಕಿತು ಮುಕ್ತಿ. ಅದೂ ಸಂಕೀರ್ಣಮಯ ಮುಕ್ತಿ. ಸಂಕೀರ್ಣ ಸಮಸ್ಯೆಗೊಂದು ಅಷ್ಟೇ ಸಂಕೀರ್ಣವಾದ ಪರಿಹಾರ. ಅಯೋಧ್ಯೆ, ದೇಶದ ಜನರನ್ನು ಬೇರ್ಪಡಿಸಿದ್ದು ಮಾತ್ರವಲ್ಲ ದೇಶವಾಸಿಗಳು ತಮ್ಮ ಸಮಯ, ಶ್ರಮ, ಸಂಪತ್ತು ಈ ವಿವಾದದ ಹಿಂದೆ ಹೂಡಿ, ಕಚ್ಚಾಡಿ, ಬಡಿದಾಡಿ “

ವಸುಧೈವ ಕುಟುಂಬಕಂ” ಎಂಬುದು ಪುಸ್ತಕದ ಬದನೇಕಾಯಿ ಮಾತ್ರ ಎಂದು ಜಗತ್ತಿಗೆ ಸಾರಿದ ಸಮಸ್ಯೆ. ಬದುಕು, ಬದುಕಲು ಬಿಡು (ಜಿಯೋ ಔರ್ ಜೀನೇದೋ) ಎನ್ನುವ ಸಮೀಕರಣಕ್ಕೆ ಒಲ್ಲೆ ಎಂದು ಪಟ್ಟು ಹಿಡಿದ ವಿವಾದ. ಮೂರು ನ್ಯಾಯಾಧೀಶರುಗಳ ಪೀಠ ಕೊನೆಗೂ ಕೊಟ್ಟಿತು ತೀರ್ಪು, ಎರಡೆಕರೆ ೭೦ ಗುಂಟೆ ಮೂರುಭಾಗ ಮಾಡಿಕೊಂಡು ಭಜನೆ, ಹರಕೆ, ಏಕದೇವೋಪಾಸನೆ ಮಾಡಿಕೊಳ್ಳಿ ಎಂದು. ಆದರೆ ಈ ಗಲಾಟೆಯಲ್ಲಿ ರಾಮ ಮತ್ತು ರಹೀಮರು ನಿಮ್ಮ ಭಜನೆಯೂ ಬೇಡ, ಭಕ್ತಿಯೂ ಬೇಡ ಎಂದು ಸದ್ದಿಲ್ಲದೇ ಕಾಲು ಕಿತ್ತಿದ್ದು ಮಾತ್ರ ಯಾರೂ ಗಮನಿಸಲೇ ಇಲ್ಲ.

ಭಾರತ ಜಾತ್ಯಾತೀತ ರಾಷ್ಟ್ರ. ಆ ಹೆಗ್ಗಳಿಕೆಗೆ ನ್ಯಾಯವೆಸಗಲು ಹೆಣಗಿದ ತೀರ್ಪು ಇದು. ಇದರಲ್ಲಿ ಯಾರಿಗೂ ವಿಜಯವಿಲ್ಲ. ಆದರೆ ವಿಜಯ ಮಾಲೆ ತಾಯಿ ಭಾರತಿಗೆ ಎಂದು ಸಮಾಧಾನ. ಆದರೂ ಕೆಲವು ಕಿಡಿ ಗೇಡಿಗಳು ಸರಕಾರದ ಕಟ್ಟುನಿಟ್ಟಾದ ನಿರ್ದೇಶನದ ನಡುವೆಯೂ “V” ಪ್ರದರ್ಶಿಸುತ್ತಾ ಏನೋ ಸಾಧಿಸಿದವರಂತೆ ಫೋಸ್ ಕೊಟ್ಟರು. ದೇವರ ಹೆಸರಿನಲ್ಲಿ ರಾಜಕಾರಣ ಮಾಡಿ ಹೊಟ್ಟೆ ಹೊರೆದು ಕೊಳ್ಳುವವರಿಗೆ ಯಾವ ಸಂದಿಗ್ಧ ಪರಿಸ್ಥಿತಿಯೂ ವಿಜಯೋಲ್ಲಸವೇ. ಇಂದು ಬೆಳಗ್ಗಿನ ಹಲವು ಪತ್ರಿಕೆಗಳನ್ನು ನೋಡಿದ ನನಗೆ ಅನ್ನಿಸಿದ್ದು ಈಗಲೂ ಮಾಧ್ಯಮಕ್ಕೆ ಭಾರತೀಯರ ನಡುವೆ ಕಂದಕ ತೊಡುವುದೇ ಇವರ ಕಾಯಕ ಎಂದು. ಕರಾವಳಿಯ ಗುಡ್ಡದ ಮೇಲೊಂದರಿಂದ  ಪ್ರಕಾಶಿತವಾಗುವ ಪತ್ರಿಕೆಯಾಗಲಿ, ಸಮಸ್ತ ಕನ್ನಡಿಗರ ಹೆಮ್ಮೆ ಎಂದು ಘೋಷಣೆ ಹೊತ್ತ ಪತ್ರಿಕೆಯಾಗಲಿ ತಮ್ಮ screaming headlines ಮೂಲಕ ಒಂದು ಸಮಾಜಕ್ಕೆ ಸಂದ ವಿಜಯವೆಂದೇ ಪ್ರತಿಬಿಂಬಿಸಿದವು. ಈ ತೆರನಾದ, ಉದ್ರೇಕಿಸುವ ಪತ್ರಿಕೆಗಳ ತಲೆಬರಹಗಳನ್ನು ನಿರ್ಲಕ್ಷಿಸಿ ನ್ಯಾಯಾಲಯದ  ತೀರ್ಪನ್ನು ತಮ್ಮ ಸಂಸ್ಕೃತಿ ತಮ್ಮಿಂದ ಬಯಸುವ characteristic poise ಜೊತೆಗೆ “ಸಬರ್” (ಸಂಯಮ) ಅನ್ನು ಮೋಹಕವಾಗಿ ಪ್ರದರ್ಶಿಸುವ ಮೂಲಕ ಮುಸ್ಲಿಂ ಸಮಾಜದ ಬಂಧುಗಳು ಮಸೀದಿಗಿಂತ ದೇಶ ದೊಡ್ಡದು ಎಂದು ಜಗತ್ತಿಗೆ ತೋರಿಸಿಕೊಟ್ಟಿದ್ದು ಸಂತಸಕರ.

ದೇಶದ ಜನಸಂಖ್ಯೆಯ ಶೇಕಡಾ ೭೭ ಭಾಗ ಇಪ್ಪತ್ತಕ್ಕೂ ಕಡಿಮೆ ರೂಪಾಯಿಯ ಆದಾಯದ ಮೇಲೆ ಕಳೆಯುತ್ತಾರಂತೆ. ಒಪ್ಪೊತ್ತಿನ ಅನ್ನಕ್ಕಾಗಿ ಪರದಾಡುವವನಿಗೆ ತನ್ನ ಹಸಿದ ಹೊಟ್ಟೆಗೆ ಊಟ ಯಾವ ಕಡೆಯಿಂದ ಬರಬಹುದು ಎನ್ನುವ ಕಾತುರ, ನಿರೀಕ್ಷೆ.  ದೇಶವನ್ನು ಕಿತ್ತು ತಿನ್ನುತ್ತಿರುವ ಸಾಮಾಜಿಕ ಅಸಮಾನತೆ, ಹಸಿವು, ಲಂಚ, ಕೊಲೆ ಸುಲಿಗೆ ಬಗ್ಗೆ ಮೇಲಿನ ಸಮಸ್ಯೆಗಳಿಗೆ ತೋರಿಸಿದ ಕಾಳಜಿ, ಕಾತುರ ತೋರಿದ್ದಿದ್ದರೆ ಪಕ್ಕದ ಚೀನಾ ಅಥವಾ ಮಲೇಷ್ಯ ದಂಥ ದೇಶಗಳ ಪ್ರಗತಿ ಕಂಡು ಕರುಬುವ ಅವಶ್ಯಕತೆ ಇರಲಿಲ್ಲ. ಏನೇ ಆಗಲಿ ಈ ದೇಶದ ನೆಮ್ಮದಿ ಕೆಡಿಸಿದ್ದ ಸಮಸ್ಯೆಗೆ ಒಂದು ಪರಿಹಾರ ಬಂತು ಅಲ್ಲಾಹನ ಊರಿನಿಂದ (ಇಲಾಹಾಬಾದ್). ಈ ತೀರ್ಪು ದೇಶಕ್ಕೆ ಅವಶ್ಯ ಬೇಕಾದ ಶಾಂತಿ ನೆಮ್ಮದಿ ಕೊಡಿಸುವುದೋ ಎಂದು ನ್ಯಾಯ ಮೂರ್ತಿಗಳು ವಿಧಿಸಿದ ಮೂರು ತಿಂಗಳುಗಳ status quo ಉತ್ತರ ನೀಡಬಹುದು.            

ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನವನ್ನು ಕುತೂಹಲದಿಂದ ನೋಡುತ್ತಾ ಕೂತ ನಮಗೆ ಕಿಟಕಿಯ ಮೂಲಕ ಕಾಣಲು ಸಿಕ್ಕಿದ್ದು, ನನ್ನ ಎರದುಉವರೆ ವರ್ಷದ ಪುಟ್ಟ ಪೋರಿ ಕಾಲುದ್ದ ಮಾಡಿಕೊಂಡು ನನ್ನ ಮೇಜಿನ ಮೇಲಿನಿಂದ ಎಗರಿಸಿದ ಪುಟ್ಟ ಭಾರತದ ಧ್ವಜದಿಂದ ತನ್ನ ಮುಖಕ್ಕೆ ತಂಗಾಳಿಯನ್ನು ಬೀಸಿಕೊಳ್ಳುತ್ತಾ ಮಂದಿರ ಮಸೀದಿ ವಿವಾದ ನನಗೆ ನಗಣ್ಯ ಎನ್ನುವ ಥರ ಕೂತಿದ್ದಳು.

ಇಂದು ಬೆಳಿಗ್ಗೆ ನನ್ನ mobile ಗೆ ಬಂದ ಸಂದೇಶ; who are we Hindu or Muslim? When there is “Ali” in “Diwali” and “Ram” in “Ramadan” cant we help India to be united?

ಮುಸ್ಲಿಮರಲ್ಲಿ ಕಾಣಲು ಸಿಕ್ಕಿದ ಈ ಮೇಲಿನ ಉದಾತ್ತ, ಸಾಮರಸ್ಯದ ಭಾವನೆ ಸರ್ವರಲ್ಲೂ ಕಾಣುವಂತಾಗಲಿ ಎಂದು ಆಶಿಸುತ್ತಾ..

ಪೈಲಟ್ ಸಾಹಸ

ಆಪತ್ಕಾಲೀನ ಪರಿಸ್ಥಿತಿಯಲ್ಲಿ ಯುದ್ಧ ವಿಮಾನದ ಪೈಲಟ್ ವಿಮಾನದಿಂದ ಕಳಚಿಕೊಂಡು (eject) ಪ್ಯಾರಾಶೂಟ್ ಮೂಲಕ ಸುರಕ್ಷಿತವಾಗಿ ಇಳಿಯುತ್ತಾನೆ. ಕೆನಡದಲ್ಲಿ ಒಂದು ಅಭ್ಯಾಸ ಯಾನದ ವೇಳೆ ತಾಂತ್ರಿಕ ವೈಫಲ್ಯದ ಕಾರಣ ನಿಯಂತ್ರಣ ತಪ್ಪಿದ ವಿಮಾನದಿಂದ ಪೈಲಟ್ ಕ್ಯಾಪ್ಟನ್ “ಬ್ರಯನ್ ಬ್ಯೂಸ್” ಸುರಕ್ಷಿತವಾಗಿ eject ಆಗಿ ತನ್ನ ಪ್ರಾಣ ಉಳಿಸಿಕೊಂಡ, ವಿಮಾನ ಅಗ್ನಿಗಾಹುತಿಯಾಯಿತು. ಇದನ್ನು ಕಣ್ಣಾರೆ ಕಂಡ ಛಾಯಾಗ್ರಾಹಕನೊಬ್ಬ ಸ್ವಲ್ಪವೂ ವಿಚಲಿತನಾಗದೆ ತನ್ನ ಗಮನ, ದೃಷ್ಟಿಯನ್ನು ಮೈ ನವಿರೇಳಿಸುವ ದೃಶ್ಯದ ಮೇಲೆ ಕೇಂದ್ರೀಕರಿಸಿ ತೆಗೆದ ಚಿತ್ರಗಳು…

ಕೋಪ ಬಂದಾಗ ಒಂದು ಮೊಳೆ

ಒಬ್ಬ ಹುಡುಗ ಮಹಾ ಕೋಪಿಷ್ಟ. ಸುಲಭವಾಗಿ ಕೆರಳುತ್ತಿದ್ದ. ಇದನ್ನು ಕಂಡು ರೋಸಿದ ತಂದೆ ತನ್ನ ಮಗನಿಗೆ ಒಂದು ಚೀಲ ತುಂಬಾ ಮೊಳೆಗಳನ್ನು ಕೊಟ್ಟು ಪ್ರತೀ ಸಲ ಕೋಪ ಬಂದಾಗ ಮನೆಯ ಹಿಂದಿನ ಗೋಡೆಗೆ ಒಂದು ಮೊಳೆ ಹೊಡೆಯಲು ಹೇಳುತ್ತಾನೆ. ಉತ್ಸಾಹದಿಂದ ಹೋಗುವ ಹುಡುಗ ಮೊದಲ ದಿನವೇ ೩೭ ಮೊಳೆಗಳನ್ನು ಹೊಡೆದು ಹಾಕುತ್ತಾನೆ ಗೋಡೆಗೆ.  ಒಂದೆರಡು ವಾರಗಳಲ್ಲಿ ತನ್ನ ಕೋಪ ತಾಪ ಎಲ್ಲಾ ತಹಬಂದಿಗೆ ಬಂದು ಗೋಡೆಗೆ ಹೊಡೆಯಬೇಕಾದ ಮೊಳೆಗಳು ಸಂಖ್ಯೆಯಲ್ಲಿ ಕಡಿಮೆಯಾಗುತ್ತವೆ. ತನ್ನ ಅಪ್ಪ ಹೇಳಿದ ಹಾಗೆ ಮೊಳೆ ಹೊಡೆಯುವುದಕ್ಕಿಂತ ಸುಲಭ ತನ್ನ ಕೋಪವನ್ನು ನಿಯಂತ್ರಿಸುವುದು ಎಂದು ಈ ಹೊತ್ತಿಗಾಗಲೇ ಹುಡುಗ ಅರಿತು ಕೊಳ್ಳುತ್ತಾನೆ. ಕೊನೆಗೊಂದು ದಿನ ಹುಡುಗ ಮೊದಲಿನ ಥರ ಕೋಪಿಷ್ಠನಾಗದೇ ಮಂದಸ್ಮಿತನಾಗುತ್ತಾನೆ, ಸಂಯಮಿಯಾಗುತ್ತಾನೆ, ಮೊಳೆಯ ಚೀಲ ಬರಿದಾಗುತ್ತದೆ. ಈ ವಿಷಯವನ್ನು ತನ್ನ ತಂದೆಗೆ ಬಂದು ಹೇಳಿದಾಗ ತಂದೆ ಹೇಳುತ್ತಾನೆ, ಮಗನೇ, ಈಗ ಹೋಗಿ ನೀನು ಹೊಡೆದ ಮೊಳೆಗಳನ್ನೆಲ್ಲಾ ದಿನಕ್ಕೊಂದರಂತೆ ಕೀಳು ಎಂದು. ಮತ್ತೊಮ್ಮೆ ಗೋಡೆ ಕಡೆ ಮರಳಿದ ಹುಡುಗ ಸಾವಧಾನದಿಂದ ದಿನಕ್ಕೊಂದರಂತೆ  ಒಂದೊಂದೇ ಮೊಳೆ ಗಳನ್ನು ಕೀಳುತ್ತಾನೆ. ಒಂದೆರಡು ವಾರಗಳ ತರುವಾಯ ಹುಡುಗ ಬಂದು ತಾನು ಎಲ್ಲಾ ಮೊಳೆಗಳನ್ನು ಕಿತ್ತ ವಿಷಯ ಹಿಗ್ಗುತ್ತಾ ತಂದೆಗೆ ತಿಳಿಸುತ್ತಾನೆ. ಮಗನನ್ನು ನೋಡಿ ಮುಗುಳ್ನಗುತ್ತಾ ಅವನ ಕೈ ಹಿಡಿದು ಕೊಂಡು ಹಿತ್ತಲಿನ ಗೋಡೆಗೆ ಬಂದ ತಂದೆ ಮಗನ ತಲೆ ತಡವುತ್ತಾ ಹೇಳುತ್ತಾನೆ, ಮಗೂ, ಎಷ್ಟು ಸುಂದರ ಕೆಲಸ ನೀನು ಮಾಡಿದೆ, ಆದರೆ ನೋಡು ಒಮ್ಮೆ ಗೋಡೆಯನ್ನು. ಮೊದಲಿನ ಹಾಗಿದೆಯೇ ಗೋಡೆ? ಎಷ್ಟೊಂದು ತೂತುಗಳು ಬಿದ್ದಿವೆ ನೋಡು ಗೋಡೆಯ ಮೇಲೆ. ಈ ಗೋಡೆ ಮೊದಲಿನ ಹಾಗೆ ಆಗಲು ಸಾಧ್ಯವೆ?  ಎಂದಿಗೂ ಇಲ್ಲ. ನೀನು ಕೋಪದಲ್ಲಿ ಆಡಿದ ಮಾತುಗಳೂ ಸಹ ಹಾಗೆಯೇ. ನಿನ್ನ ಕೋಪದ ಮಾತುಗಳು, ಜನರಿಗೆ ಮಾಡಿದ ನೋವು ನೀನು ಮೊಳೆಗಳಿಂದ ಗೋಡೆಗೆ ಮಾಡಿದ ತೂತುಗಳಂತೆ.  ಅವೆಂದೂ ಮಾಸಲಾರವು. ಒಬ್ಬನಿಗೆ ಚೂರಿ ಇರಿದು ಆ ಚೂರಿಯನ್ನು ಹಿಂದಕ್ಕೆ ಎಳೆಯಬಹುದು, ಆದರೆ ಆ ಚೂರಿ ಮಾಡಿದ ಗಾಯ? ಆ ಗಾಯ ಮಾಸುವುದೇ? ನೀನೆಷ್ಟೇ ಕ್ಷಮೆ ಕೋರಿದರೂ ಆ ಗಾಯ ಅಲ್ಲೇ ಇರುತ್ತದೆ.

ಅನರ್ಘ್ಯ ರತ್ನಗಳಂಥ ಮಾತುಗಳನ್ನು ತನ್ನ ಪ್ರೀತಿಯ ತಂದೆಯ ಬಾಯಿಂದ ಆಲಿಸಿದ ಹುಡುಗ ದಂಗುಬಡಿದವನಂತೆ, ತಟಸ್ಥನಾಗಿ ನಿಂತು ತನ್ನ ತಂದೆಯನ್ನೇ ನೋಡುತ್ತಾ ನಿಂತ ಕಣ್ಣೀರು ಹರಿಸುತ್ತಾ.