ಹಸಿವು ಮತ್ತು ಸರ್ಕಸ್

ಕೇರಳದ ಹೆಸರನ್ನು ಈಗ “ಕೇರಳಮ್” ಎಂದು ಮಾಡಲು ಸರಕಾರ ಯೋಚಿಸುತ್ತಿದೆ ಎಂದು ವರದಿ. ದಕ್ಷಿಣ ಭಾರತದ ಸಂಪೂರ್ಣಸಾಕ್ಷರ ರಾಜ್ಯ ಹೆಸರು ಬದಲಿಸುವುದರಲ್ಲಿ ಹಿಂದೆ ಇಲ್ಲ ಎಂದು ಈಗಾಗಲೇ ತೋರಿಸಿ ಕೊಟ್ಟಿದೆ. ತ್ರಿಚೂರ್, ಕ್ಯಾಲಿಕಟ್, ಟ್ರೀವೆನ್ಡ್ರಂ ಗಳನ್ನು ಬದಲಿಸಿ ತ್ರಿಶೂರ್, ಕೊಜಿಕೋಡ್, ತಿರುವನಂತಪುರಂ ಎಂದು ಬದಲಿಸಲಾಗಿದ್ದು ಹೆಸರುಗಳನ್ನ ಬದಲಿಸಿ ಅದೇನನ್ನು ಸಾಧಿಸಲು ಹೊರಟಿದ್ದೇವೆಯೋ ಎಂದು ಖಾದಿ ಧರಿಸುವ ರಾಜಕಾರಣಿಗಳೇ ಹೇಳಬೇಕು. ಭಾರತದ ಬಡತನದ ಬಗೆಗಿನ ವರದಿಯೊಂದು ನಮ್ಮ ವ್ಯವಸ್ಥೆಯ ವೈಫಲ್ಯದ ಮೇಲೆ ಕನ್ನಡಿ ಹಿಡಿದಿರುವಾಗ ರಾಜಕಾರಣಿಗಳು ಹೆಸರು ಬದಲಿಸುವ ಸರ್ಕಸ್ ಗಳಲ್ಲಿ ನಿರತರಾಗಿ ಜನರ ಲಕ್ಷ್ಯ ಬೇರೆಡೆ ತಿರುಗಿಸುವ ಆಟದಲ್ಲಿ ನಿರತರಾಗಿದ್ದಾರೆ. ಆಫ್ರಿಕಾದ ೨೬ ಅತಿ ಬಡ ರಾಷ್ಟ್ರಗಳಲ್ಲಿರುವ ಬಡವರಿಗಿಂತಲೂ ಹೆಚ್ಚು ಬಡವರು ನಮ್ಮ ದೇಶದ ಎಂಟು ರಾಜ್ಯಗಳಲ್ಲಿ ಇದ್ದಾರಂತೆ. ಆ ಎಂಟು ರಾಜ್ಯಗಳು ಯಾವುವೆಂದರೆ ಬಿಹಾರ್, ಛತ್ತೀಸ್ ಘಡ, ಒರಿಸ್ಸಾ, ಝಾರ್ಖಂಡ್, ಮಧ್ಯ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ.      

ಆದರೆ ರೊಟ್ಟಿ ಯಿಲ್ಲದೆ ಹಸಿದವರ ಸಂಖ್ಯೆ ದಿನೇ ದಿನೇ ಏರುತ್ತಿದ್ದಂತೆಯೇ ಕೋಟ್ಯಾಧಿ ಪತಿಗಳ ಸಂಖ್ಯೆಯೂ ಅಷ್ಟೇ ವೇಗದಲ್ಲಿ ಬೆಳೆಯುತ್ತಿರುವುದು ವಿಸ್ಮಯಕಾರಿ ಬೆಳವಣಿಗೆ ಎನ್ನಬಹುದು.