“ಪೆರು” ವಿಗೆ ಈ ವರುಷದ ನೊಬೆಲ್ ಸಾಹಿತ್ಯ ಪ್ರಶಸ್ತಿ



 

ಸಾಹಿತ್ಯದಲ್ಲಿ ಈ ವರ್ಷ ನೊಬೆಲ್ ಗಿಟ್ಟಿಸಿದ ಲ್ಯಾಟಿನ್ ಅಮೇರಿಕೆಯ “ಪೆರು” ದೇಶದ ಮಾರಿಯೋ ವರ್ಗಾಸ್ ಲೌಸ  ಕಾಗದ ಪುಸ್ತಕ ಪ್ರಿಯರು. “ಇ” ಪುಸ್ತಕಗಳು ಮತ್ತು ಇವನ್ನ ಓದಲು ಅನುಕೂಲ ಮಾಡಿಕೊಡುವ ಇಲೆಕ್ಟ್ರೋನಿಕ್ ಗೆಜೀಟ್ ಗಳು ಎಬ್ಬಿಸುತ್ತಿರುವ ಬಿರುಗಾಳಿಗೆ ಶತಮಾನಗಳ ನಮ್ಮ ಮಿತ್ರ “ಬಡಪಾಯಿ ಕಾಗದ” ತೂರಿ ಹೋಗುವುದು ಅವರಿಗೆ ಇಷ್ಟವಲ್ಲ.

ಮಾರಿಯೋ ವರ್ಗಾಸ್ ಅವರ ಪ್ರಥಮ ಪುಸ್ತಕ ೧೯೬೪ ರಲ್ಲಿ ಪ್ರಕಟ. ಬರಹದ ೪೬ ವರುಷಗಳ ಕಾಲದಲ್ಲಿ ವಿಶ್ವದ ಅತ್ಯುನ್ನತ ಪ್ರಶಸ್ತಿಗೆ ಭಾಜನರು ಈ ಲೇಖಕರು. ಶುಭ ಮುಂಜಾನೆ ಎನ್ನುವ ಸಂದೇಶದ ಬೆನ್ನಲ್ಲೇ ತಮಗೆ ನೊಬೆಲ್ ಸಿಕ್ಕಿತು ಎನ್ನುವ ಸುದ್ದಿಯೂ ಬಂದಿತು. ಇವರ ಆಸಕ್ತಿ ಬರೀ ಸಾಹಿತ್ಯ ಕೃಷಿಗೆ ಮಾತ್ರ ಸೀಮಿತವಲ್ಲ, ಅನ್ಯಾಯದ ವಿರುದ್ಧದ ಜನರ ಹೋರಾಟದಲ್ಲೂ ಭಾಗಿಯಾಗಿ (ನಮ್ಮ ಅರುಂಧತಿ ರಾಯ್ ರೀತಿ) ಹಲವು ಸಂಕಷ್ಟಗಳನ್ನು ಅನುಭವಿಸಿದ ಸಾಮಾಜಿಕ ಲೇಖಕ. ತನ್ನ ಹುಟ್ಟೂರಿನಲ್ಲಿ ಆಳುವವರ ದಬ್ಬಾಳಿಕೆ ಅತಿಯಾಗಿ ಅಲ್ಲಿನ ಸೇನಾಧಿಕಾರಿ ಮಾರಿಯೋ ಲೌಸ ಅವರ ಪೌರತ್ವ ಪೆರುವಿನ “ಭೌಗೋಳಿಕ ಆಕಸ್ಮಿಕ” (geographical accident) ಆಗಿದ್ದು ದೇಶದ ಪೌರತ್ವವನ್ನು ರದ್ದು ಗೊಳಿಸ ಬೇಕೆಂದು ಸರಕಾರಕ್ಕೆ ಶಿಫಾರಸ್ಸು ಮಾಡಿದಾಗ ಅಪಾಯ ಮನಗಂಡ ಈ ಲೇಖಕ ಸ್ಪೇನ್ ದೇಶದ ಪೌರತ್ವ ಪಡೆದು ಅದರ ಜೊತೆಗೆ ಪೆರುವಿನ ಪುರತ್ವವನ್ನೂ ಉಳಿಸಿಕೊಂಡರು. ಪ್ರಬಂಧಗಳು, ನಾಟಕ, ಸಾಹಿತ್ಯ ಮತ್ತು ರಾಜಕೀಯ ಹೊರಾಟಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿರುವ ಈ ಲೇಖಕ ಅಮೆರಿಕೆಯ ಮತ್ತು ಅಇರೋಪ್ಯ ದೇಶಗಳ ವಿಶ್ವ ವಿದ್ಯಾಲಯಗಳಿಗೆ ಅತಿಥಿ ಪ್ರಾಧ್ಯಾಪಕರಾಗಿ, ಭಾಷಣಕಾರರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಈ ರೀತಿಯ ಹಲವು ದೇಶಗಳ ಬಿಡುವಿಲ್ಲದ  ಪರ್ಯಟನದಿಂದ ಬರವಣಿಗೆಗೆ ತೊಡಕಾಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ ಉತ್ತರವಾಗಿ  “ವಾಸ್ತವವಾಗಿ ವಿವಿಧ ಭಾಷೆ ಗಳೊಂದಿಗಿನ ತಮ್ಮ ಬದುಕು ತಮ್ಮ ಅರಿವನ್ನು ಹೆಚ್ಚಿಸಿದ್ದು, ಒಂದೇ ಭಾವನೆಯನ್ನು ಹೇಗೆ ವಿವಿಧ ಭಾಷೆಗಳು ವ್ಯಕ್ತಪಡಿಸುತ್ತವೆ ಎನ್ನುವ ಸೂಕ್ಷ್ಮತೆ ಸಹ ತನಗೆ ಕಾಣಲು ಸಿಗುತ್ತದೆ, ಹಾಗೆಯೇ ಮಾತೃ ಭಾಷೆಯೊಂದಿಗಿನ ನನ್ನ ನಂಟು ಇತರೆ ಭಾಷೆ ಗಳೊಂದಿಗಿನ ಒಡನಾಟದಿಂದ ಇನ್ನಷ್ಟು ಶ್ರೀಮಂತ ಗೊಂಡಿದೆ” ಎಂದು ಹೇಳಿದರು. ಸಂದರ್ಶನದ ವೇಳೆ ಹೇಳಿದ ಈ ಮಾತುಗಳು ಗಡಿಬಿಡಿಯ ಅಂತಾರಾಷ್ಟ್ರೀಯ ಬದುಕು ಈ ಲೇಖಕನ ಸಂಸ್ಕಾರವನ್ನು ಹೇಗೆ ಶ್ರೀಮಂತ ಗೊಳಿಸಿತು ಎನ್ನುವ ಸತ್ಯವನ್ನು ನಮಗೆ ತೋರಿಸುತ್ತದೆ.

ಲ್ಯಾಟಿನ್ ಅಮೆರಿಕಾದ ದೇಶಗಳು ಕಿತ್ತು ತಿನ್ನುವ ಬಡತನದೊಂದಿಗೆ ಮಾದಕ ದ್ರವ್ಯಗಳ ಮಾರಾಟ ಮತ್ತು ದಂಧೆಯನ್ನು ನಡೆಸುವ ಭೂಗತ ದೊರೆಗಳ ದಬ್ಬಾಳಿಕೆ ಯಿಂದಲೂ ತತ್ತರಿಸುತ್ತಿದೆ. ಈ ಹಾವಳಿಯನ್ನ ತಡೆಯಲು ಸರಕಾರಗಳು ಕೋಟ್ಯಂತರ ಡಾಲರುಗಳನ್ನು ಇವರ ವಿರುದ್ಧ ದ ಹೋರಾಟಕ್ಕೆ ವ್ಯಯಿಸಿದರೂ ಆ ಹಣ ಲಂಚಕೋರ ಸೇನಾಧಿಕಾರಿಗಳ, ರಾಜಕಾರಣಿಗಳ ಪಾಲಾಗುವುದನ್ನು ಕಂಡ ಈ ಲೇಖಕ ಸರಕಾರದ ಈ ನೀತಿಯನ್ನು ವಿರೋಧಿಸಿ ಹಣವನ್ನ ಶಸ್ತ್ರಗಳನ್ನು ಖರೀದಿಸಲು ವ್ಯಯಿಸದೆ ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜನರಿಗೆ ಮನವರಿಕೆ ಮಾಡುವ ಅಭಿಯಾನವನ್ನು ಆರಂಭಿಸಲು ಮತ್ತು ಮಾದಕ ದ್ರವ್ಯವ್ಯಸನಿಗಳ ಚಿಕಿತ್ಸೆಗೆ ಖರ್ಚು ಮಾಡಲು ಕರೆ ನೀಡಿದರು. ಸೇನಾಧಿಕಾರಿಗಳ ಮತ್ತು ರಾಜಕಾರಣಿಗಳ ವಿಷವರ್ತುಲ ಇವರ ಮಾತುಗಳನ್ನು ಕೇಳುವ ಗೋಜಿಗೆ ಹೋಗಲಿಲ್ಲ.

ಲೇಖಕರೂ ಸಹ ಸಾಮಾನ್ಯ ಜನರಂತೆ ಪೌರರಾಗಿದ್ದು ಜನರ ಹೋರಾಟ ಮತ್ತು ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವ ನೈತಿಕ ಹೊಣೆ ಅವರ ಮೇಲೆ ಇರಬೇಕು ಎಂದು ನೊಬೆಲ್ ಪ್ರಶಸ್ತಿ ಪಡೆಯುವ ಮುನ್ನ ನಡೆದ ಚರ್ಚೆಯಲ್ಲಿ ಹೇಳಿದ್ದರು ಲೌಸ. ೧೯೯೦ ರಲ್ಲಿ ಆಲ್ಬರ್ಟೋ ಫುಜಿಮೋರಿ ವಿರುದ್ಧ ಸೋತ ಈ ಲೇಖಕ ಮತ್ತೆ ರಾಜಕೀಯದ ಕಡೆ ತಲೆಹಾಕದೆ ಪೂರ್ಣ ಸಮಯ ಬರವಣಿಗೆಯಲ್ಲಿ ತೊಡಗಿಸಿಕೊಂಡರು. ಸರ್ವಾಧಿಕಾರಿಗಳನ್ನು ಚುನಾವಣೆಯಲ್ಲಿ ಬಗ್ಗು ಬಡಿಯದಿದ್ದರೇನಂತೆ ತಮ್ಮ ಪ್ರಖರ ಬರಹವನ್ನೇ ಅಸ್ತ್ರವನ್ನಾಗಿ ಉಪಯೋಗಿಸಿ ಲೇಖನಿಯೂ ಓಟು ಗಳಷ್ಟೇ ಪರಿಣಾಮಕಾರಿ ಎಂದು ತೋರಿಸಿದರು. “ಪದಗಳೇ ಕೃತ್ಯಗಳು…. ಬರಹದ ಮೂಲಕ ಚರಿತ್ರೆಯನ್ನು ಬದಲಿಸಲು ಸಾಧ್ಯ” ಎಂದು ಬಲವಾಗಿ ನಂಬಿದವರು. ಲ್ಯಾಟಿನ್ ಅಮೆರಿಕಾದಲ್ಲಿ ಎಲ್ಲೇ ಶೋಷಣೆ ಅನ್ಯಾಯ ನಡೆದರೂ ಅಲ್ಲಿಗೆ ಧಾವಿಸುವ ಈ ಲೇಖಕ ತಾವು ಕಂಡಿದ್ದನ್ನು ಬರೆದು ನೀಚ ಕೃತ್ಯಗಳನ್ನು ಬಯಲಿಗೆಳೆಯುವ ಸಾಹಸಕ್ಕೆ ಕೈ ಹಾಕುತ್ತಾರೆ. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಕ್ರೌರ್ಯ ಸಹ ಇವರ ಲೇಖನಿಯ ಮೊನಚಿಗು ಸಿಕ್ಕು ಸಮಾಜದ ಕಣ್ಣು ತೆರೆಸುವಂತೆ ಮಾಡುತ್ತದೆ ಇವರ ಬರಹಗಳು. ಇಂಥದ್ದೇ ಒಂದು ಘಟನೆ ಮತ್ತೊಂದು “ಡೊಮಿನಿಕನ್ ರೆಪಬ್ಲಿಕ್”. ಅಲ್ಲಿನ ಸರ್ವಾಧಿಕಾರಿ ರಾಫೆಲ್ ಟ್ರೂಜಿಲೋ ೧೯೩೦ ರಿಂದ ೧೯೬೧ ರವರೆಗಿನ ತನ್ನ ಆಳ್ವಿಕೆಯಲ್ಲಿ ತನ್ನ ಮಗಂದಿರೊಂದಿಗೆ ಮಹಿಳೆಯರ ಮೇಲೆ ಅತ್ಯಾಚಾರ ದೌರ್ಜನ್ಯವನ್ನು ಪ್ರತಿರೋಧವಿಲ್ಲದೆ ನಡೆಸುತ್ತಿದ್ದ. ಎಷ್ಟೋ ಜನ ತಮ್ಮ ಹೆಣ್ಣು ಮಕ್ಕಳನ್ನು ಈ ಸರ್ವಾಧಿಕಾರಿ ಮತ್ತು ಮಗಂದಿ ರಿಗೆ “ಉಡುಗೊರೆ” ಯಾಗಿ ಕೊಡುತ್ತಿದ್ದರಂತೆ ಭಯ ಬಿದ್ದು. (ಉತ್ತರ ಭಾರತದ ಠಾಕೂರ ಜಮೀನ್ದಾರರಿಗೆ ಹೆದರಿ ಬಡ ರೈತರು ಬದುಕಿದಂತೆ).  ರಾಫೆಲೋ ನ ದೌರ್ಜನ್ಯವನ್ನು “the feast of the goat” ಪುಸ್ತಕದಲ್ಲಿ ಸವಿವರವಾಗಿ ವರ್ಣಿಸಿದ್ದಾರೆ ಈ ಲೇಖಕ. ಇದೇ ತೆರನಾದ ಮಹಿಳೆಯರ ಮೇಲಿನ ದೌರ್ಜನ್ಯ ಇರಾಕಿನ ಸದ್ದಾಮ್ ಹುಸೇನರ ಮಕ್ಕಳೂ ಬೀದಿಯಲ್ಲಿ ಕಂಡ ಸುಂದರ ಹೆಣ್ಣುಮಕ್ಕಳನ್ನು ಎಗರಿಸಿಕೊಂಡು ಹೋಗುತ್ತಿದ್ದರು ಎಂದು ಈ ಲೇಖಕರು ಹೇಳಿದರೂ  ( ಅಮೇರಿಕ ನಿಯಂತ್ರಿತ ಮಾಧ್ಯಮಗಳ ಅಪಪ್ರಚಾರವೂ ಆಗಿರಲಿಕ್ಕೆ ಸಾಕು ) “ಕ್ರೌರ್ಯ ಯಾವುದೇ ಸರ್ವಾಧಿಕಾರಿಗಳ ಆಡಳಿತದಲ್ಲೂ ಸಮನಾಗಿರುತ್ತದೆ” ಎನ್ನುವ ಅಭಿಪ್ರಾಯ “ಮಾರಿಯೋ ವರ್ಗಾಸ್ ಲೌಸ” ಅವರದು. ಕೊನೆಯದಾಗಿ ಸಾಹಿತ್ಯದ ಬಗ್ಗೆ ವರ್ಗಾಸ್ ಅವರ, ವಿಶೇಷವಾಗಿ ನಮಗೆ ಅನ್ವಯವಾಗುವ,   ಮುತ್ತಿನಂಥ ಮಾತುಗಳು…

“I think that literature has the important effect of creating free, independent, critical citizens who cannot be manipulated.”

 

 

(ಯಶಸ್ವಿಯಾಗಿ) ಬರೆಯಲು ಮೂರು ಸೂತ್ರಗಳು

ಬರಹದಲ್ಲಿ ಯಶಸ್ವಿಯಾಗಲು ಮೂರು ಸೂತ್ರಗಳಿವೆ.ಅವುಗಳ ಬಗ್ಗೆ ತಿಳಿಯುವ ಮೊದಲು ಒಂದು ನೋಟ ಬೀರೋಣ ನಮ್ಮ ಆಕಾಂಕ್ಷೆಯ ಬಗ್ಗೆ.

ಬರೆಯಬೇಕು ಎನ್ನುವ ಹಂಬಲ, ಚಪಲ ಸಾಮಾನ್ಯವಾಗಿ ಎಲ್ಲರಲ್ಲೂ ಇದ್ದಿದ್ದೇ. ಆದರೆ ಕೆಲವರು ಬರವಣಿಗೆಯನ್ನು ಎಲ್ಲಿಂದ ಆರಂಭಿಸಬೇಕು ಎಂದು ತಿಳಿಯದೆ ಭಾವನೆಗಳನ್ನು ತಮ್ಮಲ್ಲೇ ಇಟ್ಟು ಕೊಂಡಿರುತ್ತಾರೆ. ತಾವು ಬರೆದದ್ದನ್ನೆಲ್ಲಾ ಪತ್ರಿಕೆಗಳು ಪ್ರಕಟಿಸಬೇಕೆಂದೇನೂ ಇಲ್ಲವಲ್ಲ. ಆದರೆ ಅಂತರ್ಜಾಲದ ಉಗಮದೊಂದಿಗೆ ಬರೆಯುವವರಿಗೆ ಒಂದು ವೇದಿಕೆಯಾಗಿ, ವರವಾಗಿ ಬಂದವು ಬ್ಲಾಗ್ ಗಳು. ಚಿಕ್ಕಾಸಿನ ಖರ್ಚಿಲ್ಲದೆ ತಮಗೆ ಇಷ್ಟವಾದ ಹೆಸರಿನಲ್ಲಿ ಬ್ಲಾಗೊಂದನ್ನು ಆರಂಭಿಸಿಕೊಂಡು ನಮಗೆ ತೋಚಿದ್ದನ್ನು ಬರೆಯಬಹುದು. ಅಥವಾ ತಾವು ಬರೆದದ್ದು ಸಾರ್ವಜನಿಕರಿಗೆ ಕಾಣಿಸಬಾರದು ಎಂದೇನಾದರೂ ಆಸೆಯಿದ್ದರೆ ಅದಕ್ಕೂ ಹಾಕಬಹುದು ಕಡಿವಾಣವ ಸೆಟ್ಟಿಂಗ್ಸ್ ಮೂಲಕ.

ಸರಿ ಬ್ಲಾಗ್ ಏನೋ ತೆರೆದಾಯಿತು. ಬರೆಯಲು ಈಗ ಲಾಂಚಿಂಗ್ ಪ್ಯಾಡ್ ಆಗಿ ಬ್ಲಾಗ್ ಒಂದನ್ನು ತೆರೆದಾಯಿತು. ಜಿಗಿಯೋದು ಹೇಗೆ?

ಈಜಲು ಕಲಿಯಬೇಕೆಂದರೆ ಧುಮುಕಬೇಕು ನೀರಿಗೆ. ಬರೆಯಬೇಕು ಎಂದೆನ್ನಿಸಿದರೆ ಕೂಡಲೇ ಒಂದು ಪ್ರಶಸ್ತವಾದ ಸ್ಥಳವನ್ನ ಆರಿಸಿಕೊಂಡು ತೊಡಗಬೇಕು ಪೋಣಿಸಲು ಅಕ್ಷರಗಳನ್ನು. ಆದರೆ ಈ ಕೆಲಸ ಹೇಳಿದಷ್ಟು ಸುಲಭವಲ್ಲದಿದ್ದರೂ ಬರೆಯುವ ಹಂಬಲವಿದ್ದರೆ ಬರೆಯಲೇಬೇಕು. we do not write because we want to; we write because we have to ಸುಪ್ರಸಿದ್ಧ ಸಾಹಿತಿ “ಸಾಮರ್ಸೆಟ್ ಮಾಹಂ” (somerset maugham) ಅವರ ಮಾತುಗಳಿವು.  

ಇನ್ನು ಬರೆಯಲು ನಮ್ಮನ್ನು ನಾವು ತೊಡಗಿಸಿಕೊಂಡರೆ ಬೇಕಾಗುವ ಅವಶ್ಯಕತೆಗಳಲ್ಲಿ “ಓದು” ಮೊಟ್ಟ ಮೊದಲನೆಯದು. ನಮಗಿಷ್ಟವಾದ ಲೇಖಕರ ಲೇಖನ, ಬರಹಗಳನ್ನ ಓದಿ ಅವರು ಬರೆಯುವ ಶೈಲಿ, ಪದ ಪ್ರಯೋಗ ಮುಂತಾದುವುಗಳನ್ನು ಗಮನಿಸಿ ನಮ್ಮ ಬರಹಗಳಲ್ಲಿ ಅವನ್ನು ಅಳವಡಿಸಿಕೊಂಡರೆ ನಮ್ಮ ಬರಹದ ಕಡೆಗಿನ ಪ್ರಯಾಣ ಸುಖಕರ. ಆಂಗ್ಲ ಸಾಹಿತ್ಯದಲ್ಲಿ ಆಸಕ್ತಿಯುಳ್ಳವರು ಮೇಲೆ ಹೇಳಿದ Somerset  Maugham ಅವರ ಕಥೆಗಳನ್ನ ಓದಿದರೆ ಬಹಳಷ್ಟನ್ನು ಕಲಿಯಬಹುದು. ಮಾಹಂ ಅವರ of human bondage ನನ್ನನ್ನು ಕಾಡಿದ, ಮನ ಕರಗಿಸಿದ ಪುಸ್ತಕಗಳಲ್ಲೊಂದು. ಮತ್ತೊಂದು Wilkie Collins ಅವರ woman in white.  

ಮೊನ್ನೆ ದುಬೈ ನಗರದ ಕಂಪೆನಿಯೊಂದು ಜೆಡ್ಡಾದಲ್ಲಿ ಪುಸ್ತಕ ಪ್ರದರ್ಶನ ಏರ್ಪಡಿಸಿತ್ತು. ಅಲ್ಲಿ ಪುಸ್ತಕವೊಂದನ್ನು ಕೊಂಡೆ. “chicken soup for writer’s soul”. ಈ ಪುಸ್ತಕ ನೂರಾರು ಉದಾಹರಣೆಗಳ ಸಮೇತ ಹಲವು ಬರಹಗಾರರ ಅನುಭವಗಳನ್ನ ಕೊಟ್ಟು ಎಂಥ ನಕಾರಾತ್ಮಕ ಪ್ರತಿಕ್ರಿಯೆಗಳಿಗೂ ಸೊಪ್ಪು ಹಾಕದೆ ಮುನ್ನಡೆಯಲು ಪ್ರೋತ್ಸಾಹಿಸುತ್ತದೆ. ನನ್ನ ಪ್ರಕಾರ ನವ ಬರಹಗಾರರಿಗೆ ಇದಕ್ಕಿಂತ ಉತ್ತಮ ಪುಸ್ತಕ ಬೇರೊಂದಿಲ್ಲ. ಆ ಪುಸ್ತಕದಲ್ಲಿ ನ ಸ್ವಾರಸ್ಯಕರವಾದ ತುಣುಕುಗಳನ್ನು ವೈಯಕ್ತಿಕ ಬ್ಲಾಗ್ ನಲ್ಲಿ ಬರೆಯುತ್ತೇನೆ.   

ಒಹ್, ಈ ಪುರಾಣ ಎಲ್ಲಾ ಬಿಟ್ಟು ಆ ಮಾಂತ್ರಿಕ “ಸೂತ್ರ” ಗಳ ಬಗ್ಗೆ ಹೇಳಬಾರದೇ  ಎಂದು ಹಲ್ಲನ್ನು ಕಟ ಕಟಾಯಿಸಬೇಡಿ. ಬರುತ್ತೇನೆ, ಸೂತ್ರಕ್ಕೆ ಶೀಘ್ರದಲ್ಲೇ.     

ಹಾಂ, ನೋಡಿ. ಸೂತ್ರಗಳು ಎಂದಾಗ ಮತ್ತೊಂದು ಮಾತು ನೆನಪಾಯಿತು. ಸುಖ ಸಂಸಾರಕ್ಕೆ ಹತ್ತು ಸೂತ್ರಗಳು. ಅವುಗಳಲ್ಲಿ ಒಂದು, ಯಾವುದೇ ಕಾರಣಕ್ಕೂ ರಾತ್ರಿ ತರಗತಿಗಳಿಗೆ ಹೋಗಬಾರದು. (ಈ ರಾತ್ರಿ ತರಗತಿ ಬಗ್ಗೆ ಬ್ಲಾಗ್ ಬರೆದಿದ್ದೇನೆ ಸಂಪದದಲ್ಲಿ). ಮೂಗಿಗೆ ತುಪ್ಪ ಸವರೋದನ್ನು ನಿಲ್ಲಿಸಿ ಸೂತ್ರ ಅನಾವರಣ ಮಾಡ್ತೀಯೋ ಇಲ್ವೋ ಎಂದು ಧಮಕಿ ಕೊಡಬೇಡಿ. ತಾಳಿದವನು ಬಾಳಿಯಾನು. ಬರಹಕ್ಕೆ ಈ attitude ಅತ್ಯವಶ್ಯಕ. ಸುಖೀ ಸಂಸಾರಕ್ಕೂ ಅಷ್ಟೇ. ಸಂಯಮ ಬೆಳೆಸಿಕೊಳ್ಳಬೇಕು. ಲೇಖನ ವಾಪಸು ಮಾಡಿದ ಸಂಪಾದಕನ ಮೇಲೆ ಹರಿಹಾಯ್ದರೆ ಕೆಲಸ ನಡೆಯೋಲ್ಲ. chicken soup for soul ಎನ್ನುವ ಮತ್ತೊಂದು ಪುಸ್ತಕ ಡಜನ್ಗಟ್ಟಲೆ ಒಂದು ಪ್ರಕಾಶಕರಿಂದ ಮತ್ತೊಂದು ಪ್ರಕಾಶಕರವರೆಗೆ ಗಡಿಯಾರದ pendulum ನಂತೆ ಲಾಳಿ ಹೊಡೆದ ನಂತರವೇ ಕ್ಲಿಕ್ ಆಗಿದ್ದು. ಹಾಗಾಗಿ ತಾಳ್ಮೆ ಇರಲಿ. perseverance and patience. ಇವೆರಡು ಬರೀ ಬರಹಕ್ಕೆ ಮಾತ್ರವಲ್ಲ ಬದುಕಿನ ಎಲ್ಲಾ ಮಜಲುಗಳಿಗೂ  ಹರಡಲಿ ಈ ಕಂಪು. perseverance and patience ನ ಕಂಪು.

ಮತ್ತೊಂದು ವಿಷಯ. ಬರೆಯಿರಿ, ಆದರೆ ಯಾರನ್ನೂ ಇಂಪ್ರೆಸ್ ಮಾಡಲು ಬೇಡ. ಏನಿಲ್ಲವೆಂದರೂ ನಿಮ್ಮ  ತುಡಿತ, ತುರಿಕೆ ತೀರಿಸಿಕೊಳ್ಳಲಾದರೂ ಬರೆಯಿರಿ. ಅಬ್ದುಲ್, ಆ ಮೂರು ಸೂತ್ರ ಗಳು ಎಲ್ಲಯ್ಯ….. ಇಗೋ ಬಂದೆ ಮೂರು ಸೂತ್ರಗಳೊಂದಿಗೆ.

ಸಾಮರ್ಸೆಟ್ ಮಾಹಂ ಹೇಳುತ್ತಾರೆ, “ಬರೆಯಲು ಮೂರು ಸೂತ್ರಗಳು. ಆದರೆ ಅವು ಯಾವುವು ಎಂದು ದುರದೃಷ್ಟವಶಾತ್ ಯಾರಿಗೂ ಗೊತ್ತಿಲ್ಲ”.

ಹೌದು, ಮಾಹಂ ಹೇಳಿದ್ದು ಸರಿ. ಮಂತ್ರಕ್ಕೆ ಮಾವಿನ ಕಾಯಿ ಉದುರಿದ್ದನ್ನು ಕಂಡಿದ್ದೀರಾ?

ನನ್ನ ತಲೆ ಚಚ್ಚಲು ಇಟ್ಟಿಗೆ ಚೂರನ್ನು ಯಾಕೆ ಹುಡುಕುತ್ತಿದ್ದೀರಾ, ಅಲ್ಲೇ ಪಕ್ಕದಲ್ಲೇ ಇರುವ ಕೀ ಬೋರ್ಡಿನಿಂದ ಟ್ವೀಕಿಸಬಾರದೇ ನಿಮ್ಮ ಮನದೊಳಗಿನ ಮಾತುಗಳನ್ನು, ಮೌನಗಳನ್ನು?   

ಚಿತ್ರ: ನನ್ನ “ನಡೆಯುಲಿ”ಯಿಂದ