ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು

ಕಣ್ಣಿಗೆ ಕಣ್ಣು, ಹಲ್ಲಿಗೆ, ಹಲ್ಲು – ಕ್ರೈಸ್ತ ಧರ್ಮದ “ಹಳೇ ಒಡಂಬಡಿಕೆ” ಯ ಈ ಮಾತುಗಳು ಇಸ್ಲಾಮಿನ ಶರಿಯಾ ಕಾನೂನಿನಲ್ಲೂ ಶಿಫಾರಸು ಮಾಡಲಾಗಿದೆ. ಒಂದು ರೀತಿಯ ಸೇಡಿಗೆ ಸೇಡು. ಆದರೆ ಇದನ್ನು ತಪ್ಪು ಎನ್ನುವವರೂ ಕೆಲವೊಮ್ಮೆ ಘಟನೆಗಳ, ಅಪರಾಧಗಳ ಕ್ರೌರ್ಯದ ಗಂಭೀರತೆಯನ್ನು ಗಮನದಲ್ಲಿಟ್ಟು ಕೊಂಡು ಈ ರೀತಿಯ retributory justice ವಿಧಾನ ಸರಿ ಎಂದು ವಾದಿಸುವರು.   

ಕಣ್ಣಿಗೆ ಕಣ್ಣು ಬೇಕು ಎನ್ನುವವರು ಒಂದು ಕಡೆಯಾದರೆ ಮಾನವೀಯ ದೃಷ್ಟಿಯಿಂದ ದೃಷ್ಟಿಯನ್ನು ಬೇರೆಡೆ ಹೊರಳಿಸಬೇಕು ಎನ್ನುವವರು ಮತ್ತೊಂದು ಕಡೆ. ಪ್ರತೀಕಾರ ಮಾನವ ಸಹಜ ಗುಣ. ಪುಟ್ಟ ಮಕ್ಕಳ ಪ್ರತಿಕ್ರಿಯೆಗಳೂ ಈ  ಮಾನವ ಸಹಜ ಗುಣಕ್ಕೆ ಅನುಗುಣವಾಗಿಯೇ ಇರುವುದನ್ನು ಗಮನಿಸಿದ್ದೇವೆ. ಕ್ಷಮಿಸುವವನು ಉದಾರಿ, ಆ ಗುಣ ಎಲ್ಲರಿಗೂ ಬರಬೇಕೆಂದಿಲ್ಲ. ಸಮಾಜ ಶಿಕ್ಷೆಯನ್ನು ಪ್ರತೀಕಾರ ಎನ್ನುವ ದೃಷ್ಟಿಯಿಂದ ನೋಡಬಾರದು, ಹಾಗೆ ನೋಡಿದಾಗ ಒಸಮಾ ಬಿನ್ ಲಾದೆನ್ ನ ವಧೆಯೂ ಸಮ್ಮತವೆನ್ನಿಸದು. ಒಸಾಮಾ ನ ವಧೆ ಸರಿ ಎಂದು ನಾಗರೀಕ ಸಮಾಜ ಖಂಡಿತವಾಗಿ ಒಪ್ಪುತ್ತದೆ. ಕೆಲವರು ಅವನನ್ನು ವಿಚಾರಣೆಗೆ ಒಳಪಡಿಸಿ ಶಿಕ್ಷಿಸಬೇಕಿತ್ತು ಎನ್ನುವವರೂ ಇದ್ದಾರೆ. ಆದರೆ ಆತನನ್ನು ಹಿಡಿದು ವಿಚಾರಣೆಗೆ ಒಳಪಡಿಸಲು ಮಾಡಿ ಕೊಳ್ಳ ಬೇಕಾದ ಸಿದ್ಧತೆಗಳನ್ನು ನೋಡಿದಾಗ, ಅದರ ಎಡರು ತೊಡರು ಗಳನ್ನು, ಗಮನಕ್ಕೆ ತೆಗೆದು ಕೊಂಡಾಗ targeted elemination ಹೆಚ್ಚು ಪ್ರಾಯೋಗಿಕ ಎಂದು ತೋರುತ್ತದೆ.  

ಪ್ರತಿಭಾವಂತಳಾದ ಇಂಜಿನಿಯರಿಂಗ್ ಪದವೀಧರೆಯಾದ ಇರಾನಿನ ಯುವತಿ ಅಮೀನ ಬೆಹ್ರಾಮಿಯ ಜೀವನ ಸಂಪೂರ್ಣವಾಗಿ ನಾಶವಾಗಿ ಹೋಯಿತು, ತನ್ನನ್ನು ಬಯಸಿದ ಮಾಜಿದ್ ಮೋವಾಹೆದಿ ಎನ್ನುವ ನರ ರಾಕ್ಷಸನಿಂದ. ಆಮಿನಾಳನ್ನು ವಿವಾಹವಾಗಲು ಬಯಸಿದ್ದ ಮಾಜಿದ್ ಈಕೆಯ ಅಸಮ್ಮತಿಯಿಂದ ಕ್ರುದ್ಧನಾದ. ನನ್ನನ್ನು ಮದುವೆಯಾಗದಿದ್ದರೆ ಕೊಲ್ಲುತ್ತೇನೆ ಎಂದು ಮೊದಲಿಗೆ ಬೆದರಿಸಿದ್ದ ಇವನು ಮನಸ್ಸು ಬದಲಿಸಿ ನನಗೆ ಸಿಗದ ಇವಳು ಬೇರಾರಿಗೂ ಸಿಗಕೂಡದು ಎಂದು ತೀರ್ಮಾನಿಸಿದ . ಒಂದು ಬಕೆಟ್ ತುಂಬಾ ಆಸಿಡ್ ಅನ್ನು ಅಮೀನಾಳ ಮುಖದ ಮೇಲೆ ಎರಚಿದ. ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡ ಈಕೆ ಭಯ ಹುಟ್ಟಿಸುವಂಥ ಕುರೂಪಿಯಾದಳು.  ಇರಾನಿನ ನ್ಯಾಯಾಲಯ ದಂಡವನ್ನೂ ಸೆರೆವಾಸದ ಶಿಕ್ಷೆಯನ್ನೂ ವಿಧಿಸಿತು ಮಾಜಿದ್ ನಿಗೆ. ಈ ತೀರ್ಪಿಗೆ ಅಮೀನ ಸಮ್ಮತಿಸಲಿಲ್ಲ. ನನ್ನ ನೋವನ್ನು  ಸ್ವತಃ ತನ್ನ ಕಣ್ಣು ಗಳನ್ನು ಕಳೆದು ಕೊಳ್ಳುವ ಮೂಲಕ ಮಾತ್ರ ಮಾಜಿದ್ ಅರಿಯಬಲ್ಲ ಎಂದು ವಾದಿಸಿದಳು. ಇದೇ ೧೪ ಮೇ, ೨೦೧೧ ರಂದು ಆಕೆಗೆ ಸಿಕ್ಕಿತು ಬಯಸಿದ ನ್ಯಾಯ. ಹತ್ತಿರದ ಆಸ್ಪತ್ರೆಗೆ ಮಾಜಿದ್ ನನ್ನು ದಾಖಲಿಸಿ ಅವನಿಗೆ ಅರಿವಳಿಕೆ ಕೊಟ್ಟು ಅವನ ಕಣ್ಣುಗಳಲ್ಲಿ ಆಸಿಡ್ ಪ್ರೋಕ್ಷಣೆ ಮಾಡಲು ತೀರ್ಮಾನ ವಾಯಿತು. ಈಗ ಆಗಮನವಾಯಿತು “ಕರುಣಾನಿಧಿ” ಜನರ ದಂಡು. amnesty international ನೇತೃತ್ವದ ಈ ದಂಡು ಹೇಳಿದ್ದು ಈ ರೀತಿ ನ್ಯಾಯ “ ಕಿರುಕುಳಕ್ಕೆ ಸಮಾನ” ಎಂದು. ಕ್ರೂರ ಮಾಜಿದ್ ಎಸಗಿದ ಕೃತ್ಯಕ್ಕೆ ಯಾವ ರೀತಿಯ ವಿಶ್ಲೇಷಣೆ ಕೊಡುತ್ತದೋ ಅಮ್ನೆಸ್ಟಿ. ಪಾಶ್ಚಾತ್ಯರ ಯಾವುದೇ ಮಾತಿಗೂ ಒಲ್ಲೆ ಎಂದು ಹೇಳಿ ಸುಖ ಅನುಭವಿಸುವ ಇರಾನ್ amnesty ಯ ಮಾತಿಗೆ ತಲೆ ಬಾಗಿತು. ಆದರೆ ಅಮೀನಾ ಮಾತ್ರ ತನ್ನ ಹೊರಾಟವನ್ನು ಖಂಡಿತಾ ಮುಂದುವರೆಸುವಳು. ಕಣ್ಣಿಗೆ ಕಣ್ಣು, ಈ ನ್ಯಾಯದಿಂದ ಮಾತ್ರ ಈಕೆ ತೃಪ್ತಳಾಗುವಳು. ಈ ತೆರನಾದ ನ್ಯಾಯದಿಂದ ಭಾವೀ ರಾಕ್ಷಸರು ಪಾಠ ಕಲಿಯಬೇಕು.          

ಗಾಂಧೀಜಿ ಪ್ರಕಾರ ಕಣ್ಣಿಗೆ ಕಣ್ಣು ಎನ್ನುವ ಪ್ರತೀಕಾರದ ಶಿಕ್ಷೆಯಿಂದ ಪ್ರಪಂಚವೇ ಕುರುಡಾಗಬಹುದು. ಇಡೀ ಪ್ರಪಂಚವೇ ಅನೈತಿಕತೆ, ಅನ್ಯಾಯ, ಹಿಂಸೆ ಎಸಗುವ ಕಣ್ಣಾಗುವುದಾದರೆ ಅದು ಕುರುಡಾಗಿರುವುದೇ ಹೆಚ್ಚು ಲೇಸು. ಇಲ್ಲದಿದ್ದರೆ ಪ್ರಪಂಚವೇ ಕುರೂಪಗೊಳ್ಳುವ ಸಾಧ್ಯತೆ ಹೆಚ್ಚು. ಗಾಂಧೀಜಿಯ ಈ ಮಾತಿಗೆ ನಾವು ಸಮ್ಮತಿಸಿದರೆ ಅವರನ್ನು ವಧಿಸಿದ ದ್ರೋಹಿಯನ್ನು ದೇಶ ಸುಮ್ಮನೆ ಬಿಡಬೇಕಿತ್ತು. ಯೋಚಿಸಿ ನೋಡಿ, ಮೈ ಝುಮ್ಮೆನ್ನುವುದಿಲ್ಲವೇ?  ಕೆಲವೊಂದು ಮಾತುಗಳು ಎಲ್ಲಾ ಕಾಲಕ್ಕೂ ಉದ್ಧರಿಸಲು ಉಪಯೋಗಕ್ಕೆ ಬರಬಹುದು, ದಯೆಯ ಆ ಮಾತುಗಳನ್ನು ಭಾಷಣಗಳಲ್ಲೂ, ಬರಹಗಳಲ್ಲೂ ಉಪಯೋಗಿಸಲು ಸುಂದರವಾಗಬಹುದು. quote ರೂಪದಲ್ಲಿ ಆಕರ್ಷಕ ಈ ಹೇಳಿಕೆಗಳು. ಆದರೆ ಸಮಾಜದ ಸ್ವಾಸ್ಥ್ಯವನ್ನೂ, ಹಿತವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡಾಗ ಮಾಜಿದ್ ನಂಥ ದುರುಳರ ಕಣ್ಣುಗಳನ್ನು ಕೀಳಲೇಬೇಕು. ಮುಗ್ಧ, ಅಮಾಯಕ ಹೆಣ್ಣಿನ ಕಣ್ಣುಗಳನ್ನು ಕಿತ್ತ ಅವನ ಕಣ್ಣುಗಳು ತನ್ನ ಕ್ರೌರ್ಯವನ್ನು ಕಂಡು ಹಿಗ್ಗಬಾರದು. ಅಂತಾರಾಷ್ಟ್ರೀಯ ಒತ್ತಡಕ್ಕೆ ಇರಾನ್ ತಲೆಬಾಗದೆ ಆಕೆ ಬಯಸಿದ ನ್ಯಾಯವವನ್ನು ಅವಳಿಗೆ ದಯಪಾಲಿಸಲೇಬೇಕು.  

ಹಿಂಸೆಗೆ ಪ್ರತಿ ಹಿಂಸೆಯಾಗಿ ಅಸ್ತ್ರ ದ ಪ್ರಯೋಗ ನಡೆಯದಿದ್ದರೆ ಪ್ರಪಂಚ ಸುರಕ್ಷಿತ ಸ್ಥಳವಲ್ಲ. ಸ್ಪೇನ್ ದೇಶದ ದ್ವೀಪವೊಂದರ ಪ್ರವಾಸದಲ್ಲಿದ್ದ ಇಂಗ್ಲೆಂಡಿನ ಮಧ್ಯ ವಯಸ್ಕ ಮಹಿಳೆಯೊಬ್ಬರನ್ನು ಯಾವುದೇ ಕಾರಣವಿಲ್ಲದೆ ಓರ್ವ ಯುವಕ ೧೫ ಬಾರಿ ಚಾಕುವಿನಿಂದ ಇರಿದದ್ದು ಸಾಲದು ಎಂದು ಆಕೆಯ ರುಂಡಚ್ಛೇದ ಮಾಡಿ ರಸ್ತೆ ಬದಿಗೆ ಎಸೆದ. ಈ ಮಹಿಳೆ ಪ್ರವಾಸದ ವೇಳೆ ಅಲ್ಲಿನ ಶಾಲೆಯ ಮಕ್ಕಳಿಗೆ ರಸ್ತೆ ಸುರಕ್ಷತೆ ಬಗ್ಗೆ ಪಾಠ ಹೇಳಿ ಕೊಡುತ್ತಿದ್ದಳಂತೆ. ಇಂಥ ಹಿಂಸ್ರ ಪಶುಗಳನ್ನು ಸಮಾಜ ಸಹಿಸಿದಾಗ, ಅವರಿಗೆ ತಕ್ಕ ಶಿಕ್ಷೆ ಕೊಡುವಲ್ಲಿ ವಿಫಲವಾದಾಗ ಇಂಥ ಕರುಳು ಹಿಂಡುವ ಘಟನೆಗಳು ಎಲ್ಲೆಲ್ಲೂ ಕಾಣಲು ಸಿಗುತ್ತವೆ. ಕೊಲೆಗಾರ ಒಂದೆರಡು ವರ್ಷ ಜೇಲಿನಲ್ಲಿ ಕಳೆದು ಸಮಾಜಕ್ಕೆ ಮರಳಿ ಬರುತ್ತಾನೆ ತನ್ನ ಮಿಕವನ್ನು ಅರಸುತ್ತಾ.

ಬಿಹಾರದ “ನೀತಿ” ಪಾಠ

ಬಿಹಾರದ ವಿಧಾನ ಸಭೆಗೆ ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಜನತಾ ದಳ (ಸಂಯುಕ್ತ) ಮತ್ತು ಭಾಜಪ ಮೈತ್ರಿ ಕೂಟಕ್ಕೆ ಭರ್ಜರಿ ಗೆಲುವು ಆಶ್ಚರ್ಯ ತರದಿದ್ದರೂ ವಿಜಯದ ಪ್ರಮಾಣ ಮತ್ತು ಕಾಂಗ್ರೆಸ್, ಲಾಲೂ ಪಕ್ಷಗಳ ಧೂಳೀಪಟ ಎಲ್ಲರನ್ನೂ ದಂಗು ಬಡಿಸಿದ್ದಂತೂ ನಿಜ. ಬಹುಶಃ ಇಂದಿರಾ ವಧೆಯ ನಂತರ ನಡೆದ ಚುನಾವಣೆಯಲ್ಲಿನ ಕಾಂಗ್ರೆಸ್ ಜಯಭೇರಿಯ ಪ್ರಮಾಣವನ್ನೂ ಮೀರಿಸುವ ಗೆಲುವಾಗಿರಬಹುದು ನೀತೀಶರದು. ಅಷ್ಟೇ ಅಲ್ಲ ರಾಹುಲ್ ಗಾಂಧಿಯವರ ವರ್ಚಸ್ಸನ್ನು ಉಪಯೋಗಿಸಿ ಉತ್ತರ ಪ್ರದೇಶದ ರೀತಿಯ ಫಲಿತಾಂಶ ನಿರೀಕ್ಷಿಸಿದ್ದ ಕಾಂಗ್ರೆಸ್ಸಿಗರಿಗೆ ಈ ಚುನಾವಣೆ ಒಂದು ಕಹಿ ಅನುಭವ. ಬಿಹಾರದ ಚುನಾವಣೆಯ ಮತ್ತೊಂದು ಸ್ವಾರಸ್ಯ ಮತ್ತು positive outcome ಏನೆಂದರೆ ಈ ಗೆಲುವಿನೊಂದಿಗೆ ಜನತಾ ದಳ ದ ಮೈತ್ರಿ ಪಕ್ಷಕ್ಕೆ “ನೀತಿ” ಪಾಠ ಸಹ ಸಿಕ್ಕಿದ್ದು. ಅತ್ಯಂತ ಸಂಕುಚಿತ, ‘ಹೇಟ್’ ಅಜೆಂಡಾದೊಂದಿಗೆ ಚುನಾವಣೆಯಲ್ಲಿ ಸ್ಪರ್ದಿಸುವ ಪಕ್ಷಗಳಿಗೆ ಮಂದಿರವೊಂದೇ ಮಂತ್ರವಲ್ಲ, “ಸರ್ವೇ ಜನಃ ಸುಖಿನೋಭವಂತು” ವೇ ನನ್ನ ತಂತ್ರ ಎಂದು ಸ್ಪಷ್ಟವಾಗಿಸಿದ ನೀತೀಶ್ ಕುಮಾರ್, ಕೇವಲ ಅಭಿವೃದ್ದಿ, ಹಿಂದುಳಿದವರ, ಬಡ ಜನರ ಏಳಿಗೆಯ ಮಂತ್ರದೊಂದಿಗೆ ಚುನಾವಣೆ ಗೆಲ್ಲಲು ಸಾಧ್ಯ ಎನ್ನುವ ಸಾಮಾನ್ಯ ಸತ್ಯದ ಪರಿಚಯ ಮಾಡಿಸಿದರು. ಹೀಗೆ ಅಭಿವೃದ್ದಿಯ ಏಕ ಮಾತ್ರ ಅಜೆಂಡಾ ಇಟ್ಟುಕೊಂಡು ಬಿಹಾರದ ಚುನಾವಣೆಯಲ್ಲಿ ಸೆಣಸಿದ ನೀತೀಶ್ ಕುಮಾರ್ ಅಭೂತಪೂರ್ವವಾದ ವಿಜಯವನ್ನೂ ಸಾಧಿಸಿದರು. ಚುನಾವಣೆಯ ಪ್ರಚಾರದ ವೇಳೆ ದಿಗ್ಗಜರನ್ನು ಪ್ರಚಾರಕ್ಕೆ ಇಳಿಸುವುದು ವಾಡಿಕೆ. ಹಿಂದುತ್ವದ ಪೋಸ್ಟರ್ ಬಾಯ್ ಗಳೆಂದೇ ಗುರುತಿಸಿಕೊಳ್ಳುವ ನರೇಂದ್ರ ಮೋದಿ ಮತ್ತು ವರುಣ್ ಗಾಂಧೀ ಯನ್ನ ಪ್ರಚಾರಕ್ಕೆ ಇಳಿಸಲು ಭಾಜಪ ಶ್ರಮ ಪಟ್ಟರೂ ನೀತೀಶ್ ಮಾತ್ರ ಪಟ್ಟು ಬಿಡದೆ ಯಾವುದೇ ಕಾರಣಕ್ಕೂ ಈ ಈರ್ವರು ವ್ಯಕ್ತಿಗಳು ಬಿಹಾರದಲ್ಲಿ ಕಾಲಿಡಕೂಡದು ಎಂದು ಸ್ಪಷ್ಟವಾಗಿ ತಾಕೀತು ಮಾಡಿದ್ದರು. ಈ ತಾಕೀತಿನ ತಾಕತ್ತಿನಿಂದ ಮತ್ತು ಸರ್ವರನ್ನೂ ಸಮಾನವಾಗಿ ನಡೆಸಿಕೊಳ್ಳುವ ತಮ್ಮ ಇರಾದೆಯಿಂದ ಸಮಾಜದ ಎಲ್ಲ ವರ್ಗಗಳ ಬೆಂಬಲ ಪಡೆದು ದೇಶದಲ್ಲಿ ಒಂದು ಹೊಸ ಸಾಮಾಜಿಕ ರಾಜಕೀಯ ಸಮೀಕರಣದ ನಿರ್ಮಾಣಕ್ಕೆ ನೀತೀಶ್ ಕಾರಣಕರ್ತರಾದರು. ಸ್ವಜನ ಪಕ್ಷಪಾತ, ಹಗರಣ, ಮತೀಯವಾದ, ಜಾತೀವಾದ ಮುಂತಾದ ಹಲವು ರೋಗಗಳಿಂದ ಬಳಲುತ್ತಿರುವ ಭಾರತೀಯ ರಾಜಕಾರಣಕ್ಕೆ ನೀತೀಶರಂಥ ರಾಜಕಾರಣಿಗಳು ತುಂಬಾ ಅವಶ್ಯಕ. ತೀರಾ ಹಿಂದುಳಿದ ರಾಜ್ಯವೆಂದು ಗೇಲಿಗೆ ಒಳಗಾಗಿದ್ದ ಬಿಹಾರಕ್ಕೆ ಒಂದು ಸುಂದರವಾದ ಆಡಳಿತವನ್ನು ನೀತೀಶರು ಕೊಡುವಂತಾಗಲಿ ಎಂದು ಹಾರೈಸೋಣ.

Holding a grudge….

ಎಷ್ಟು ಸತ್ಯ ನೋಡಿ, ಮೇಲಿನ ಮಾತುಗಳು. ದೇವರು ಮನುಷ್ಯರನ್ನು ಕ್ಷಮಿಸುತ್ತಾನಂತೆ, ಆದರೆ ಮನುಷ್ಯ ಮಾತ್ರ ಕ್ಷಮಿಸಲಾರ. ಹಳೆಯಕಾಲದ, ಓಬೀರಾಯನ ಕಾಲದಲ್ಲಿ ನಡೆದ, ನಡೆಯದ ಘಟನೆಗಳ ಬಗ್ಗೆ ಸೇಡಿನ ಮನೋಭಾವದಿಂದ ತಿರುಗುವ ಮನುಷ್ಯನಿಗೆ ಧ್ವೇಷ, ಹಗೆ, ಸೇಡು ಇವು ತನ್ನ ವ್ಯಕ್ತಿತ್ವವನ್ನೇ ಸುಟ್ಟು ಹಾಕುವ ಬೆಂಕಿ ಎಂದು ತಿಳಿಯುವ ದಿನ ಯಾವಾಗ ಬರಬಹುದು?

ಬರದಿರಿ ನಮ್ಮ ದೇಶಕ್ಕೆ

ಒಂದು ಕಡೆ ವಿಶ್ವ ನಮ್ಮ ಪ್ರಗತಿಯ ಬಗ್ಗೆ ಮೆಚ್ಚುಗೆ ತೋರಿದರೆ ಮತ್ತೊಂದೆಡೆ ನಮ್ಮ ಅಧಿಕಾರಿ, ರಾಜ ಕಾರಣಿಗಳಿಗೆ ತಮ್ಮ ದೇಶಗಳಿಗೆ ಬರದಂತೆ ವಿಸಾ ನೀಡದೆ ಅಪಮಾನ ಮಾಡುತ್ತಿದೆ. ವಿಶ್ವ ರಾಜಕಾರಣದಲ್ಲಿ ನಮ್ಮದೇ ಆದ ಛಾಪು ಮೂಡಿಸಲು ಯತ್ನಿಸುತ್ತಿರುವ ನಮಗೆ ವಿವಿಧೆಡೆಗಳಿಂದ ಊಹಿಸಲಾಗದ ತೊಡಕುಗಳು ಎದುರಾಗುತ್ತಿವೆ. ನಮ್ಮ ಮೇಲೆ ಹಗೆ ಸಾಧಿಸುವುದೇ ತಮ್ಮ ಕಸುಬು ಎಂದುಕೊಂಡಿರುವ ನೆರೆಯ ದೇಶಕ್ಕೆ ಅದರ ಎಲ್ಲಾ ರೀತಿಯ ಹುನ್ನಾರಗಳ ಅರಿವಿದ್ದೂ ಪಾಶ್ಚಾತ್ಯ ರಾಷ್ಟ್ರಗಳು ತಮ್ಮದೃಷ್ಟಿಯನ್ನು ಮತ್ತೆಲ್ಲೋ ಬೀರಿ ಪರೋಕ್ಷ ಬೆಂಬಲವನ್ನು ನೀಡುತ್ತಿವೆ. ಅವರ ಪ್ರಕಾರ ಪಾಕ್ ನಿಜವಾಗಿಯೂ “ಪಾಕ್” (ಶುದ್ಧ). ನಮ್ಮ ವಿದೇಶಾಂಗ ಇಲಾಖೆಯನ್ನು ನಿರ್ವಹಿಸುತ್ತಿರುವವರಿಗೆ ತಮ್ಮ ಸೂಟು, ಗರಿಗರಿಯಾದ ರೇಷ್ಮೆ ಸೀರೆ ಪ್ರದರ್ಶಿಸುವುದೇ ತಮ್ಮ ಪ್ರತಿಭೆ ಎಂದು ಬಗೆದು ನಡೆಯುತ್ತಿರುವುದು ಖೇದಕರ.

ಉತ್ತರ ಅಮೇರಿಕಾ ಖಂಡದ ಕೆನಡಾ ದೇಶ ಅಂತರ ರಾಷ್ಟ್ರೀಯ ರಾಜಕಾರಣದಲ್ಲಿ ಅಷ್ಟೇನೂ ದೊಡ್ಡ ಪಾತ್ರ ವಹಿಸದ ದೇಶ. ಈ ದೇಶಕ್ಕೆ ಹೋಗಲು ಗಡಿ ಭದ್ರತಾ ಪಡೆಗೆ ಸೇರಿದ ನಿವೃತ್ತ ಪೇದೆ ವಿಸಾ ಕೇಳಿದಾಗ ಸಿಕ್ಕ ಉತ್ತರ  “ಕುಪ್ರಸಿದ್ಧ ಹಿಂಸಾತ್ಮಕ ಪಡೆ” (notoriously violent force) ಗೆ ಸೇರಿದವರಿಗೆ ಕೆನಡಾ ಒಂದು ಕನಸು ಎಂದು. ನಮ್ಮ ಅರೆ ಸೈನಿಕ ಪದೆಯನ್ನು “ಕುಪ್ರಸಿದ್ಧ” ಎನ್ನುವ ಮಟ್ಟಿಗೆ ಬೆಳೆಯಿತು ದಾರ್ಷ್ಟ್ಯತನ ಈ ಸದಾ ಮಗುಮ್ಮಾಗಿ ಇರುವ ದೇಶಕ್ಕೆ.  ಇನ್ನಿತರ ಸೈನಿಕ ಅಧಿಕಾರಿಗಳಿಗೂ ಇದೇ ರೀತಿ ಒಂದಲ್ಲ ಒಂದು ರೀತಿಯ “ನೀವು ನಮ್ಮ ದೇಶಕ್ಕೆ ಬರಲು ಅರ್ಹರಲ್ಲ” ಎಂದು ಹಣೆ ಪಟ್ಟಿ. ಈಗ ಒಂದು ಪ್ರಶ್ನೆ. ಪಕ್ಕದ ಪಾಕಿಸ್ತಾನದ ಅಧಿಕಾರಿಗಳಿಗೂ ಇದೇ ರೀತಿಯ ಉಪಚಾರ ಸಿಕ್ಕಿದೆಯೇ? ಸಿಕ್ಕಿರಲಿಕ್ಕಿಲ್ಲ. ಏಕೆಂದರೆ ಅಲ್ಲಿನ ಅಧಿಕಾರಿ, ರಾಜಕಾರಣಿಗಳು ಸಮಯ ಸಾಧಕರು, ಅವರಿಗೆ ರೊಟ್ಟಿಯ ಯಾವ ಮಗ್ಗುಲಿಗೆ ಬೆಣ್ಣೆ ತಗುಲಿದೆ ಎಂದು ಚೆನ್ನಾಗಿ ಗೊತ್ತು, ಅದರ ಪ್ರಕಾರವೇ ನಡೆದುಕೊಂಡು ತಮ್ಮ ಕಾರ್ಯ ಸಾಧಿಸಿ ಕೊಳ್ಳುತ್ತಾರೆ. ನಾವಾದರೋ, ಬೆಳ್ಳಗಿರುವುದೆಲ್ಲಾ ಹಾಲು ಎನ್ನುವ ಸಮೂಹ. ಅಷ್ಟು ಮಾತ್ರವಲ್ಲ, ಬಿಳಿಯರ ಯುದ್ಧವನ್ನು ಪಾಕಿ ಸೈನಿಕರು ಮಾಡುತ್ತಿದ್ದಾರೆ ಎನ್ನುವ ಕಾರಣಕ್ಕೂ ಅವರ ತಂಟೆಗೆ ಯಾರೂ ಹೋಗುವುದಿಲ್ಲ.  

ಇಂಥ ಕಸಿವಿಸಿಯುಂಟು ಮಾಡುವ ಘಟನೆಗಳಿಂದ ನಮಗೆ ಮುಕ್ತಿ ಕೊಡಿಸಲು ಚಾಣಕ್ಯ ಪುರಿಯ ಸಾಹೇಬರುಗಳಿಂದ (ಅಲ್ಲಿ ಈಗ ಮಹಿಳಾ ಸಾಹೇಬರೂ ಇದ್ದಾರೆ) ಸಾಧ್ಯವೇ? ಕೇವಲ ಕೋಪದಿಂದ ಒಂದು ಪತ್ರ ಬರೆದು ಸ್ಪಷ್ಟೀಕರಣ ಕೇಳಿ, ಸಂಜೆಯಾದ ಕೂಡಲೇ ಇದೇ ಬಿಳಿಯರ ಜೊತೆ ಸೇರಿಕೊಂಡು ಪಂಚತಾರಾ ಹೋಟೆಲುಗಳಲ್ಲಿ ಮಜಾ ಉಡಾಯಿಸುವವರಿಂದ ದೇಶ ತನಗೆ ಸಲ್ಲಬೇಕಾದ ಮಾನವನ್ನು ನಿರೀಕ್ಷಿಸ ಬಹುದೇ?

ಈ ತೆರನಾದ ಘಟನೆಗಳಿಗೆ ಬಿಳಿಯರ ದೃಷ್ಟಿದೋಷ ಕಾರಣವೋ ಅಥವಾ ನಮ್ಮಲ್ಲೇ ಏನಾದರೂ ನಮಗೇ ಕಾಣದ ಐಬಿದೆಯೋ ತಿಳಿಯದು. ಹೌದು ಕೆಲವೊಮ್ಮೆ ಪ್ರಮಾದಗಳು ಸಂಭವಿಸಿರಬಹುದು, ಅಂಥ ಘಟನೆಗಳನ್ನ ಆಧಾರವಾಗಿಟ್ಟು ಕೊಂಡು ನಮ್ಮನ್ನು ಈ ರೀತಿ ಹೀನಾಯವಾಗಿ ನಡೆಸಿಕೊಂಡರೆ ಅದಕ್ಕೆ ನಮ್ಮ ಉತ್ತರ ಹೇಗಿರಬೇಕು? ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು. ಅಲಿಪ್ತ ನೀತಿಯ ಮೇಲೆ ವಿಪರೀತ ಅವಲಂಬನೆ ಮಾಡಿದ್ದರಿಂದ ನಮ್ಮಲ್ಲಿನ ರೋಷ ಮಾಯವಾಗಿ ಎಲ್ಲವನ್ನೂ ಸೈರಿಸಿಕೊಂಡು ಸೋತ ನಗೆಯೊಂದಿಗೆ ನಮ್ಮ ದಾರಿ ನೋಡಿ ಕೊಳ್ಳುವ ನಮ್ಮ ಜಾಯಮಾನ ನಮಗೇ ಮುಳು ವಾಗುತ್ತಿದೆ. ವಿದೇಶಾಂಗ ಇಲಾಖೆಗೆ ಹೊಸರಕ್ತ ತುಂಬಿ, ಈ ಇಲಾಖೆ ನಡೆಸಲು ವಯಸ್ಸಾದವರ ಅಗತ್ಯವಿಲ್ಲ, ಯುವ ಅಧಿಕಾರಿಗಳಿಗೆ ಸಿಗಲಿ ಚುಕ್ಕಾಣಿ.