ತೇರೆ ಬಿನ್ ಲಾದೆನ್…

ಲಾದೆನ್, ನೀನಿಲ್ಲದೆ… ಸಿನೆಮಾ ದೊಡ್ಡ ಸುದ್ದಿ ಮಾಡಿತು ನಮ್ಮ ದೇಶದಲ್ಲಿ. ಲಾದೆನ್ ಬಗೆಗೆ ಅಮೆರಿಕೆಯ ಅತಿ ಆಸಕ್ತಿಯ ಕುರಿತು ರಚಿಸಿದ ಈ ಚಿತ್ರ ವೀಕ್ಷಕರನ್ನು ರಂಜಿಸಿತು. ಲಾದೆನ್ ನ         enigma ರಾಜಕಾರಣಿ, ಸುದ್ದಿ ಪಂಡಿತರನ್ನು ಮಾತ್ರವಲ್ಲ ಚಿತ್ರರಂಗವನ್ನೂ ಬಾಧಿಸಿತು. ಹತ್ತು ಹಲವು ವರ್ಷಗಳಿಂದ ಒಂದೇ ಸಮನೆ ಅಮೇರಿಕಾ ಲಾದೆನ್ ಗಾಗಿ ಪ್ರಪಂಚ ಜಾಲಾಡಿದರೂ ಸಿಗದೇ ಹತಾಶವಾಗಿದ್ದಾಗ ಇದ್ದಕ್ಕಿದ್ದಂತೆ, ಯಾವ ಸುಳಿವೂ, ಮುನ್ಸೂಚನೆಯೂ ಇಲ್ಲದೆ justice is done, Laden is gone ಎಂದು ಬೆಳ್ಳಂ ಬೆಳಗ್ಗೆ  ಕೇಳಿ ತಬ್ಬಿಬ್ಬಾದ ನಮಗೆ ಲಾದೆನ್ ಸಾವು ಸಿನಿಮೀಯ ರೀತಿ ಎಂದು ಅನ್ನಿಸಿದರೆ ತಪ್ಪಾಗಲಾರದು. ಹತ್ತು ವರ್ಷಗಳಿಂದ ಅತ್ಯಾಧುನಿಕ ಉಪಗ್ರಹಗಳಿಂದ ಹಿಡಿದು ಅಮೇರಿಕನ್ ಸೈನಿಕರ high tech binocular ಗಳಿಗೂ ಸಿಗದೇ ತಪ್ಪಿಸಿಕೊಳ್ಳುತ್ತಿದ್ದ ಬಿನ್ ಲಾದೆನ್ ದಿಢೀರನೆ ಕೊಲ್ಲಲ್ಪಟ್ಟ ಎಂದರೆ ಒಂದು ರೀತಿಯ ಸಿನಿಮೀಯ ತಾನೇ?  

ಲಾದೆನ್ ಬರೀ ಅಮೆರಿಕೆಗೆ ಮಾತ್ರವಲ್ಲ, ನಮ್ಮ ದೇಶದಲ್ಲೂ ಕುತೂಹಲ, ಭಯ, ಆಕ್ರೋಶ ಬರಿಸಿದ ಹೆಸರು. ಅಮೆರಿಕೆಯ ಮೇಲೆ ಮತ್ತು ವಿಶ್ವದ ಇತರೆ ನಗರಗಳಲ್ಲಿ ತನ್ನ ಸಾವಿನ ಏಜೆಂಟರನ್ನು ಹರಿಬಿಟ್ಟ ಲಾದೆನ್ ಕೊನೆಗೂ ಸೆಣೆಸುತ್ತಾ  ಉರುಳಿ ಬಿದ್ದ ಅಮೆರಿಕೆಯ ನಾವಿಕ ದಳದ ಯೋಧರ ಗುಂಡುಗಳಿಗೆ,  ಪಾಕಿಸ್ತಾನದ “ಅಬೋಟ್ಟಾಬಾದ್” ನಗರದಲ್ಲಿ.

ಅಬೋಟ್ಟಾಬಾದ್, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಿಂದ ಕೇವಲ ೩೫ ಮೈಲು ದೂರ ಇರುವ, ಪ್ರತಿಷ್ಠಿತ ಸೈನಿಕ ತರಬೇತಿ ಕಾಲೇಜು ಹೊಂದಿದ ಈ ನಗರದಲ್ಲಿ ಬಿನ್ ಲಾದೆನ್ ಸುಮಾರು ಐದು ವರ್ಷಗಳಿಗೂ ಹೆಚ್ಚು ಕಾಲ ಅವಿತು ಕೊಂಡಿದ್ದ ಎಂದರೆ ಯಾರೂ ದಂಗಾಗುವರು. ಅಮೆರಿಕೆಯಂತೂ ಮೂರ್ಛೆ ಬೀಳುವುದೊಂದು ಬಾಕಿ. ಭಯೋತ್ಪಾದನೆ ತಡೆಯಲು, ಲಾದೆನ್ ಕ್ರುತ್ಯಗಳನ್ನು ತಡೆಯಲು ಪಾಕಿಸ್ತಾನದ ಬೆಂಬಲ ಪಡೆದಿದ್ದ ಅಮೇರಿಕಾ ಈ ಸಹಾಯಕ್ಕೆ ಕೊಡುತ್ತಿದ್ದ ಫೀಸು ವರ್ಷಕ್ಕೆ ೩ ಬಿಲ್ಲಿಯನ್ ಡಾಲರ್. ಯಾಚಕ ದೇಶ. ಇಂಥದ್ದೇ ಮತ್ತೊಂದು ಯಾಚಕ ದೇಶ ಇಸ್ರೇಲ್. ಬಿನ್ ಲಾದೆನ್ ನನ್ನು ಹುಡುಕುತ್ತಿದ್ದೇವೆ, ತಾಲಿಬಾನಿ ಗಳನ್ನು ಸದೆ ಬಡಿಯುತ್ತಿದ್ದೇವೆ ಎಂದು ಸುಳ್ಳು ಸುಳ್ಳೇ ಭರವಸೆ ನೀಡುತ್ತಾ ಅಮೆರಿಕೆಯ ಡಾಲರುಗಳ ಲಂಚವನ್ನು ಲಜ್ಜೆಯಿಲ್ಲದೆ ಸ್ವೀಕರಿಸಿದ ಪಾಕ್ ಅಮೆರಿಕೆಗೆ ಮೋಸ ಮಾಡಿತೆಂದೇ ವಿಶ್ವದ, ಅಮೆರಿಕನ್ನರ ನಂಬಿಕೆ. ಈ ರೀತಿ ಪುಕ್ಕಟೆ ಯಾಗಿ ಸಿಗುತ್ತಿದ್ದ ಸಂಪತ್ತನ್ನು ನುಂಗುತ್ತಿದ್ದ ಪಾಕಿಗೆ ಲಾದೆನ್ ಚಿನ್ನದ ತತ್ತಿ ಇಡುವ ಕೋಳಿ. main source of income. ಪಾಪ, ಲಾದೆನ್ ಸಾವಿನಿಂದ ದೊಡ್ಡ, ಭರಿಸಲಾರದ ನಷ್ಟ ಪಾಕಿಗೆ.  

ಪಾಕಿಸ್ತಾನ ಮಾತ್ರ ತನಗೆ ಲಾದೆನ್ ನ ಇರುವಿನ ಬಗ್ಗೆ ಗೊತ್ತೇ ಇಲ್ಲ ಎಂದು ಆಣೆ ಹಾಕಿ ಹೇಳಿದರೂ circumstantial evidence ಇದಕ್ಕೆ ವ್ಯತಿರಿಕ್ತ. ಈ ವಿವಾದದಲ್ಲಿ ಮತ್ತೊಂದು ಸಮಸ್ಯೆ ಇದೆ. ಅಮೇರಿಕಾ ಮತ್ತು ಪಾಕಿಸ್ತಾನ chronic liars. ಶುದ್ಧ ಸುಳ್ಳರು. ಈ ಇಬ್ಬರ ತಗಾದೆ ಬಗೆಹರಿಸಲು ಇಲ್ಲಿದೆ ಲಿಟ್ಮಸ್ ಟೆಸ್ಟ್. ಲಾದೆನ್ ಎಲ್ಲಿದ್ದಾನೆ ಎನ್ನುವುದು ಪಾಕಿಗೆ ತಿಳಿದಿತ್ತೆ? ಪಾಕಿನ ಸಹಾಯವಿಲ್ಲದೆ ಅಮೆರಿಕೆಯ ಬ್ಲಾಕ್ ಹಾಕ ಹೆಲಿಕಾಪ್ಟರ್ ಗಳು ಹೇಗೆ ತಾನೇ ಲಾದೆನ್ ಇರುವಲ್ಲಿಗೆ ಬರಲು ಸಾಧ್ಯ? ಅಲ್ಕೈದಾ ಸಂಘಟನೆಯ ಕೆಂಗಣ್ಣಿಗೆ ಗುರಿಯಾಗಬಹುದು ಎನ್ನುವ ಭೀತಿ ಪಾಕಿಗೆ ತಾನು ಈ ಸಾಹಸದಲ್ಲಿ ಪಾಲು ಗೊಂಡಿಲ್ಲ ಎಂದು ಹೇಳಲು ಪ್ರೇರೇಪಿಸುತ್ತಿರಬಹುದೇ? ಪಾಕಿಸ್ತಾನದ ಪರಿಸ್ಥತಿ ಅಡಕ್ಕೊತ್ತರಿ ಯಲ್ಲಿ ಸಿಕ್ಕ ಅಡಿಕೆಯಂತೆ. ಲಾದೆನ್ ಇರುವ ಸ್ಥಳ ತೋರಿಸಿ ಅಮೆರಿಕೆಗೆ ಸಹಕಾರ ನೀಡಿದೆ ಎಂದರೆ ಅಲ್ ಕೈದಾ ಬಿಡೋಲ್ಲ, ಲಾದೆನ್ ಎಲ್ಲಿದ್ದಾನೆ ಎಂದು ತನಗೆ ತಿಳಿದಿಲ್ಲ ಎಂದರೆ ಅಮೇರಿಕಾ ಬಿಡೋಲ್ಲ. ಸುಮಾರು  ಐದು ವರ್ಷಗಳ ಕಾಲ ದೊಡ್ಡ ಪಾಕಿಸ್ತಾನದ ರಾಜಧಾನಿಯ ಹಿತ್ತಲಿನಲ್ಲಿ,  ಬಂಗಲೆಯೊಂದರಲ್ಲಿ ವಾಸಿಸುತ್ತಿದ್ದ ಲಾದೆನ್ ಬಗ್ಗೆ ಪಾಕ್ ಸೈನ್ಯಕ್ಕೆ, ಸರಕಾರಕ್ಕೆ ತಿಳಿದಿಲ್ಲ ಎಂದರೆ ದೊಡ್ಡ ಆಶ್ಚರ್ಯವೇ. ಒಂದು ವೇಳೆ ಪಾಕಿಗೆ ಲಾದೆನ್ ಪಾಕಿನಲ್ಲಿ ಇರುವ ಅರಿವು ಇಲ್ಲದಿದ್ದರೆ ಅಮೇರಿಕಾ ತಾನು ನೀಡುವ ಉದಾರ ಧನ ಸಹಾಯ ಮುಂದುವರೆಸಬಹುದು. ಅಥವಾ ಲಾದೆನ್ ಪಾಕಿಸ್ತಾನದಲ್ಲಿ ಇರುವುದನ್ನು ಅಮೆರಿಕೆಗೆ ತಿಳಿಸದೇ ಡಬಲ್ ಗೇಂ ಆಡಿದ್ದರೆ ಪಾಕಿಸ್ತಾನವನ್ನು ದಾರಿಗೆ ತರುವ ಕೆಲಸ ಅಮೇರಿಕಾ ಶೀಘ್ರ ಶುರು ಮಾಡಬೇಕು. ಇದೇ ಟೆಸ್ಟು. Litmus ಟೆಸ್ಟು.    

ಬಿನ್ ಲಾದೆನ್ ಇಲ್ಲದೆ ಪಾಕ್ ಹೇಗೆ ತಾನೇ ಜೀವಿಸೀತು ಎನ್ನುವುದೀಗ ಆಸಕ್ತಿಕರ ಪ್ರಶ್ನೆ. ಪ್ರೀತೀ,  ನೀನಿಲ್ಲದೆ ನಾ ಹೇಗಿರಲಿ… ಎಂದು ಶೋಕ ಗೀತೆ ಹಾಡುತ್ತಿರಬಹುದೇ ಪಾಕಿಗಳು?

೨೦೦೧ ರ ಅಮೆರಿಕೆಯ ವಿರುದ್ಧದ ಧಾಳಿಗೆ ಬಿನ್ ಲಾದೆನ್ ನನ್ನು ನೇರ ಹೊಣೆಯಾಗಿರಿಸಿದ ಜಾರ್ಜ್ ಬುಶ್, ಬಿನ್ ಲಾದೆನ್ wanted, dead or alive ಎಂದು ಘೋಷಿಸಿದ. ಅಮೆರಿಕೆಯ ಮೇಲೆ ನಿರ್ದಯೀ, ಭೀಕರ ಧಾಳಿ ಮಾಡಿ ತಾನು ಒಂದು ದಿನ ಪೂರ್ತಿ ರಹಸ್ಯ ಅಡಗು ತಾಣವೊಂದರಲ್ಲಿ ದಿನ ಕಳೆಯುವಂತೆ ಮಾಡಿದ ಬಿನ್ ಲಾದೆನ್ ನ ತಲೆಗೆ ೨೫ ಮಿಲ್ಲಿಯನ್ ಡಾಲರ್ ಮೊತ್ತದ ಬೆಲೆಯನ್ನೂ ಕಟ್ಟಿದ ಬುಶ್.  ಹೊಗೆಯುಗುಳುತ್ತಾ ನೆಲಕ್ಕುರುಳಿದ ನ್ಯೂಯಾರ್ಕ್ ನ ಗಗನ ಚುಂಬಿ ಕಟ್ಟಡಗಳು ಅಮೆರಿಕನ್ನರ ಚಿತ್ತ ಕಲಕಿದವು. ಕ್ರುದ್ಧ ಅಮೇರಿಕಾ ಬಿನ್ ಲಾದೆನ್ ಅಡಗಿದ್ದ ಆಫ್ಘಾನಿಸ್ತಾನ ವನ್ನು ಆಕ್ರಮಣ ಮಾಡಿತು. ಬಿನ್ ಲಾದೆನ್ ಎಲ್ಲಿದ್ದರೂ ಹೊಗೆ ಹಾಕಿ ಹೊರತೆಗೆಯುತ್ತೇನೆ ಎಂದು ಘರ್ಜಿಸಿದ ಬುಶ್ ಆಫ್ಘಾನಿಸ್ತಾನದ ಗುಡ್ಡಗಾಡು ಗಳನ್ನು ಮಾತ್ರವಲ್ಲ ಅಲ್ಲಿನ ತೋರಾ ಬೋರಾ ಗವಿ ಸಮುಚ್ಛಯಗಳನ್ನು ಜಾಲಾಡಿದ. ಸೋವಿಯೆಟ್ ಸೇನೆಗೆ ಚಳ್ಳೆ ಹಣ್ಣು ತಿನ್ನಿಸಿದ್ದ, ಸ್ವತಃ ಅಮೆರಿಕನ್ನರಿಂದಲೇ ತರಬೇತಿ ಪಡೆದ, ಸ್ವಾತಂತ್ರ್ಯ ಹೋರಾಟಗಾರ ಎಂದು ರೋನಾಲ್ಡ್ ರೇಗನ್ನರಿಂದ ಹೊಗಳಿಸಿಕೊಂಡಿದ್ದ  ಬಿನ್ ಲಾದೆನ್ ರಂಗೋಲಿ ಕೆಳಗೆ ತೂರಿಕೊಳ್ಳುವುದನ್ನು ಕರಗತ ಮಾಡಿಕೊಂಡ.  

ಬಿನ್ ಲಾದೆನ್,  wanted, dead or alive ಎಂದ ಅಮೇರಿಕಾ ಲಾದೆನ್ ಇರುವ ಮನೆಯ ಮೇಲೆ ಧಾಳಿ ಮಾಡಿ, ೪೦ ನಿಮಿಷಗಳ ಕಾಳಗದಲ್ಲಿ ಎರಡು ಗುಂಡುಗಳನ್ನು ಲಾದೆನ್ ತಲೆಗೆ ಸಿಡಿಸಿ ಕೊಂದಿದ್ದಾರೂ ಏಕೆ? ಅವನನ್ನು ಜೀವಂತ ಸೆರೆ ಹಿಡಿದು, ಅಮೆರಿಕೆಯ USS COLE , ಆಫ್ರಿಕಾದ ದಾರುಸ್ಸಲಾಮ್, ಸ್ಪೇನ್ ನ MADRID, ಲಂಡನ್, ಸೌದಿ ಅರೇಬಿಯಾದ ದಹರಾನ್, ಇರಾಕ್, ಸೋಮಾಲಿಯಾ, ಇಂಡೋನೇಷ್ಯಾದ ಬಾಲಿ ಮುಂತಾದ ನಗರಗಳ ಮೇಲೆ ಧಾಳಿ ಮಾಡಿದ ಈತನನ್ನು ವಿಚಾರಣೆ ಮಾಡಬಹುದಿತ್ತಲ್ಲ. ಅಮೆರಿಕೆಯ ಕಾರ್ಯ ವೈಖರಿ ಆ ದೇಶದಷ್ಟೇ ನಿಗೂಢ. ಕ್ರಿಸ್ಟಫರ್ ಕೊಲಂಬಸ್ ಕಂಡು ಹಿಡಿಯುವವರೆಗೂ ನಿಗೂಢವಾಗಿದ್ದ ದೇಶವಲ್ಲವೇ ಅಮೇರಿಕಾ? ಈತನನ್ನು ಸೆರೆ ಹಿಡಿದು ಅಮೇರಿಕಾ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿ ಕೊಳ್ಳಲು ಇಷ್ಟ ಪಡಲಿಲ್ಲ. ವಿಚಾರಣೆ ವೇಳೆ ಬಿನ್ ಲಾದೆನ್ ಬಾಯಿ ಬಿಟ್ಟರೆ ತಾವು ಕೇಳಲು ಇಚ್ಛಿಸುವುದಕ್ಕಿಂತ ಸ್ವಲ್ಪ ಹೆಚ್ಚನ್ನೇ ಬಡಬಡಿಸಬಹುದು. ಈ ಕಸಿವಿಸಿಯಿಂದ ಪಾರಾಗಲು ಇರುವ ಒಂದೇ ದಾರಿ ಎಂದರೆ ನೇರ ಆಕ್ರಮಣ. ಈ ಆಕ್ರಮಣದಲ್ಲಿ ಅಮೇರಿಕಾ ಯಶಸ್ಸನ್ನು ಕಂಡಿತು.         

ತಾನು ಕರಿಯನಾದ ಒಂದೇ ಕಾರಣಕ್ಕೆ ದಿನವೂ ಬಿಳಿ ಅಮೆರಿಕನ್ನರ ಕುಹಕಕ್ಕೆ, ಅವಹೇಳನಕ್ಕೆ  ಗುರಿಯಾಗುತ್ತಿದ್ದ ಒಬಾಮ ಕೊನೆಗೆ ತನ್ನ ಜೀವನದ ಅತಿ ದೊಡ್ಡ ಅವಮಾನವನ್ನು ಎದುರಿಸಬೇಕಾಯಿತು. ಒಬಾಮಾರ ಜನನ ಪ್ರಮಾಣ ಪತ್ರವನ್ನು ಬಲ ಪಂಥೀಯ ರಿಪಬ್ಲಿಕನ್ ಪಕ್ಷ ಕೇಳಿತು. ಒಬಾಮಾ ತನ್ನ ಜನನ ಪ್ರಮಾಣ ಪತ್ರದ ಜೊತೆ ಜೊತೆಗೇ ಅಮೆರಿಕನ್ನರ ಸಿಂಹಸ್ವಪ್ನನಾಗಿದ್ದ ಲಾದೆನ್ ನ ಸಾವಿನ ಪ್ರಮಾಣ ಪತ್ರವನ್ನೂ ಅಮೆರಿಕನ್ನರಿಗೆ ನೀಡಿ ತಾನು ಕಾರ್ಯಕ್ಷಮತೆಯಲ್ಲಿ ಯಾವ ಬಿಳಿ ಅಧ್ಯಕ್ಷನಿಗೂ ಕಡಿಮೆಯಲ್ಲ ಎನ್ನುವುದನ್ನು ತೋರಿಸಿ ಕೊಟ್ಟರು.   

ಒಸಾಮಾ ಬಿನ್ ಮುಹಮ್ಮದ್ ಬಿನ್ ಅವಾದ್ ಬಿನ್ ಲಾದೆನ್.  ೫೪ ವರ್ಷ ಪ್ರಾಯದ, ಆರಡಿ ಮೂರಿಂಚು ಎತ್ತರದ ಸ್ಫುರದ್ರೂಪಿ ಮತ್ತು ಆಗರ್ಭ ಶ್ರೀಮಂತ ಆಫ್ಘನ್ ಗುಡ್ಡ ಗಾಡಿನ ಜನರ ವಿಶ್ವಾಸ, ಪ್ರೀತಿ, ಅಭಿಮಾನ ಗಳಿಸಲು ಕಾರಣವಾಗಿದ್ದಾದರೂ ಏನು? ಜನರೊಂದಿಗೆ ಸುಲಭವಾಗಿ, ಆತ್ಮೀಯತೆಯಿಂದ ಬೆರೆಯುತ್ತಿದ್ದ ಈತ ಸೌಮ್ಯ ಮಾತುಗಾರಿಕೆಯಿಂದ, ತನ್ನ ಉದಾರ ಸ್ವಭಾವದಿಂದ ಅಲ್ಲಿನ ಯುವಜನರ ಮನ ಗೆದ್ದಿದ್ದ. ಕೋಟ್ಯಾಧೀಶ ಮನೆತನದಿಂದ ಬಂದ ಈತ ಐಶಾರಾಮದ ಬದುಕನ್ನು ಬಿಟ್ಟು ಆಫ್ಘನ್ ಗುಡ್ಡಗಾಡಿನಲ್ಲಿ ಒಣಗಿದ ಚಪಾತಿ ತಿನ್ನುತ್ತಾ ತಮ್ಮೊಂದಿಗೆ ಇರುತಿದ್ದ ಈತನನ್ನು ಕಂಡು ಜನ ಮಾರುಹೋದರು. ಸೋವಿಯೆಟ್ ಸೈನ್ಯದೊಂದಿಗೆ ಹೋರಾಡಿದ ಈತ ಓರ್ವ ಸೈನಿಕನೊಂದಿಗೆ hand to hand combat ನಲ್ಲಿ ಸೈನಿಕನ್ನು ಕೊಂದು ಅವನ kalashnikov ಬಂದೂಕನ್ನು ವಶಪಡಿಸಿ ಕೊಂಡಿದ್ದ. ಈ ಬಂದೂಕು ಅವನ ಅಭಿಮಾನದ ಸ್ವತ್ತಾಗಿತ್ತು.

ಈತ ಆರಂಭಿಸಿದ ಅಲ್ ಕೈದಾ ಒಂದು ಸಂಘಟನೆಯೋ ಆಗಿರದೆ ಒಂದು ತೆರನಾದ ideology ಆಗಿತ್ತು. ಸದಸ್ಯ ಶುಲ್ಕವಾಗಲೀ, ಯಾವುದೇ formal induction ಆಗಲಿ ಬೇಕಿಲ್ಲದ ಈ ವಿಚಾರಧಾರೆಗೆ ಮೂರು ಅಂಶಗಳೇ ಉರುವಲಾಗಿ ಕೆಲಸ ಮಾಡುತ್ತಿದ್ದವು. ಆಕ್ರೋಶ, ನಿರಾಶೆ, ನಿಸ್ಸಹಾಯಕತೆ (anger, frustration, desperation).  ಒಂದು ಕಡೆ ಮುಸ್ಲಿಂ ದೇಶಗಳಲ್ಲಿನ ಆಳುವವರ ಭ್ರಷ್ಟಾಚಾರ ಸಾಲದು ಎಂಬಂತೆ ಅಮೆರಿಕೆಯ ಮೇಲಿನ ವಿಪರೀತ ಅವಲಂಬನೆ ಮತ್ತು ಅರಬ್ಬರ ಸಂಪತ್ತನ್ನು ಲೂಟಿ ಹೊಡೆಯುತ್ತಾ ಇಸ್ರೇಲ್ ದೇಶವನ್ನು ಸಾಕುತ್ತಿದ್ದ ಅಮೆರಿಕೆಯ ಆಟ ಈತನಲ್ಲಿ ಆಕ್ರೋಶ ಹುಟ್ಟಿಸಿತ್ತು. ಸೌದಿ ದೊರೆಗಳ ವಿರುದ್ಧವೂ ಈತ ಸಮರ ಸಾರಿದ ನಂತರ ಇವನ ವಿರೋಧಿಗಳ ಪಟ್ಟಿ ದೊಡ್ಡದಾಗುತ್ತಾ ಹೋಯಿತು. ಈತನ ನೂರಾರು ಹಿಂಬಾಲಕರಲ್ಲಿ ಹಲವರನ್ನು ಕೊಂದು, ನೂರಾರು ಜನರನ್ನು ಜೈಲಿಗೆ ತಳ್ಳಿ ಅಲ್ ಕೈದಾ ಪಿಡುಗನ್ನು ಕೊನೆಗಾಣಿಸಿದ ಸೌದಿ ಸರಕಾರ ಭಯೋತ್ಪಾದನೆ ತಡೆಯುವಲ್ಲಿ ಯಾವ ಕ್ರಮ ತೆಗೆದು ಕೊಳ್ಳುವುದಕ್ಕೂ ತಾನು ಹೇಸುವುದಿಲ್ಲ ಎಂದು ವಿಶ್ವಕ್ಕೆ ತೋರಿಸಿ ಕೊಟ್ಟಿತು.   

ಯಹೂದಿಗಳ ಕೈಯ್ಯಲ್ಲೂ, ಅಮೆರಿಕೆಯ ಕೈಯ್ಯಲ್ಲೂ ಮುಸ್ಲಿಮರ ಮಾರಣ ಹೋಮ ನೋಡಿದ ಬಿನ್ ಲಾದೆನ್ ಪ್ರತಿಕ್ರಯಿಸಿದ್ದು ಹಿಂಸಾ ಮಾರ್ಗದಿಂದ. ಸುಮಾರು ೧೫೦೦ ವರ್ಷಗಳ ಚರಿತ್ರೆ ಇರುವ ಇಸ್ಲಾಂ ಧರ್ಮಕ್ಕೆ ಬಹುಶಃ ಸ್ವತಃ ಮುಸ್ಲಿಂ ಆದ ಬಿನ್ ಲಾದೆನ್ ಮಾಡಿದಷ್ಟು ಅಪಕಾರ ಬೇರಾರೂ ಮಾಡಿರಲಾರ ರೇನೋ? ತನ್ನ ಕುಕೃತ್ಯಗಳಿಂದ ಎರಡು ಯುದ್ಧಗಳಿಗೆ ಕಾರಣನಾದ, ಎರಡು ದಶಲಕ್ಷಕ್ಕೂ ಅಧಿಕ ಮುಸ್ಲಿಮರ ಸಾವಿಗೆ ಸಾಕ್ಷಿ ನಿಂತ ಬಿನ್ ಲಾದೆನ್ ಅದ್ಯಾವ ರೀತಿ ತಾನು ನಂಬಿದ ಧರ್ಮದ ಸೇವೆ ಮಾಡಿದನೋ ಅವನೇ ಬಲ್ಲ.  ವಿಶ್ವದ ಡಜನ್ ಗಟ್ಟಲೆ ಹೆಚ್ಚು ನಗರಗಳಲ್ಲಿ ಸಾವು ನೋವನ್ನು ತಂದು ನಿಲ್ಲಿಸಿದ ಬಿನ್ ಲಾದೆನ್ ಕೊನೆಗೂ ಹಿಂಸೆಯ ಮೂಲಕವೇ ತನ್ನ ಜೀವ ಕಳೆದುಕೊಂಡ. ಇಂಡೋನೇಷ್ಯಾದ “ಬಾಲಿ” ಯಿಂದ ಹಿಡಿದು ಆಫ್ರಿಕಾದ  ನೈರೋಬಿ ವರೆಗೆ ಸಾವು ನೋವಿನ ಕರಾಳ ಕಂಬಳಿಯನ್ನು ಹರಡಿದ ಬಿನ್ ಲಾದೆನ್ “ವಿನಾಕಾರಣ ಒಬ್ಬನನ್ನು ಕೊಂದರೆ ಇಡೀ ಮನುಕುಲವನ್ನು ಕೊಂದಂತೆ” ಎಂದ ಹೇಳಿದ ತನ್ನ ಭಗವಂತನ ಮುಂದೆ ನಿಂತು ಯಾವ ಸಮಜಾಯಿಷಿ ನೀಡುವನೋ?

ಬಿನ್ ಲಾದೆನ್ ನಿರ್ಗಮನದಿಂದ ನಮ್ಮೀ ವಿಶ್ವ ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆಗೆ ಕಾಲಗರ್ಭದಲ್ಲಿ ಅಡಗಿದೆ  ಉತ್ತರ.

ಟ್ವಿಟ್ಟರ್ ನಲ್ಲಿ ಸಿಕ್ಕಿದ್ದು:

Kentucky Fried Chicken ಶುರು ಮಾಡಿದ “ಕರ್ನಲ್ ಸ್ಯಾಂಡರ್ಸ್” ನ ನಿಧನದೊಂದಿಗೆ KFC ಯ franchising ನಿಲ್ಲಲಿಲ್ಲ. ಅದೇ ರೀತಿ ಅಲ್ ಕೈದಾ ಸ್ಥಾಪಕನ ಸಾವಿನಿಂದ ಅಲ್ ಕೈದಾ ಸಹ ಮುಗಿಯೋದಿಲ್ಲ.  ಆದರೆ ಇದೇ ವೇಳೆ, ಅಂತರಾಷ್ಟ್ರೀಯ ಖ್ಯಾತಿಯ, ಸಂಪಾದಕ ಭಾರತೀಯ ಮೂಲದ ಫರೀದ್ ಜಕರಿಯಾ ಹೇಳಿದ್ದು, loss of a symbol can end a movement.  

ವಿ. ಸೂ: ನನ್ನ ಈ ಲೇಖನ ಬಿನ್ ಲಾದೆನ್ ನ ಅವಸಾನ ಮತ್ತು ಅವಸಾನದ ಕ್ಷಣಗಳನ್ನು ಅಮೆರಿಕೆಯ ವೃತ್ತಾಂತವನ್ನು ಆಧರಿಸಿದ್ದು. ಯಾವುದೇ independent confirmation ಯಾರಿಗೂ ಲಭ್ಯವಾಗಿಲ್ಲ.      

 

ಪ್ರವಾದಿ ಜಯಂತಿ. ಭಾರತದಲ್ಲಿ ರಜೆ, ಸೌದಿಯಲ್ಲಿ ಇಲ್ಲ.

ಇಂದು ಬೆಳಿಗ್ಗೆ ನನ್ನ ಮಿತ್ರ ನಾಗರಾಜನಿಗೆ ಫೋನ್ ಮಾಡಿ ಮಾತನಾಡುತ್ತಿದ್ದಾಗ ಏನಪ್ಪಾ, ನಾಳೆ ಹಬ್ಬಾ ಜೋರಾ, ಎಂದು ಕೇಳಿದ. ಇದ್ಯಾವ ಹಬ್ಬಾ ನಾಳೆ, ಎಂದು ಯೋಚಿಸುತ್ತಿರುವಾಗ ಅವನು ಹೇಳಿದ ಅದೇ, ನಿಮ್ ಹಬ್ಬ ಈದ್ ಮಿಲಾದ್ ನಾಳೆ, ಇಲ್ಲಿ ಸರಕಾರೀ ರಜೆ ಎಂದ. ಓಹೋ, ಹೌದಾ ಎಂದು ಉದ್ಗಾರ ತೆಗೆದಾಗ ಅವನಿಗೆ ಆಶ್ಚರ್ಯ. ಏನು ಅಲ್ಲಿ ಇಲ್ವಾ ರಜೆ ಎಂದ. ನಾನಂದೆ ಇಲ್ಲಿ ಸೌದಿ ಅರೇಬಿಯಾದಲ್ಲಿ ಪ್ರವಾದಿಗಳ ಜಯಂತಿಗೆ ರಜೆ ಇಲ್ಲ. ಅಂಥ ಒಂದು ದಿನ ಇದೆ ಎಂದೂ ಇಲ್ಲಿನ ಜನಕ್ಕೆ ಗೊತ್ತಿಲ್ಲ. ಪ್ರವಾದಿ ಜಯಂತಿ ಇರಲಿ, ಇಲ್ಲಿನ ರಾಜ ಸತ್ತಾಗಲೂ ರಜೆ ಕೊಡದ ದುರುಳರು ಇವರು ಎಂದು ನನ್ನ ದುಃಖವನ್ನು ವ್ಯಕ್ತಪಪಡಿಸಿದಾಗ ಅವನೂ ಸಂತಾಪ ಸೂಚಿಸಿದ ನನ್ನ ದೌರ್ಭಾಗ್ಯಕ್ಕೆ. ದೌರ್ಭಾಗ್ಯವಲ್ಲದೆ ಮತ್ತೇನು? ಭಾರತದಲ್ಲಿ ಪ್ರತೀ ಮೂರು ದಿನಗಳಿಗೊಮ್ಮೆ ಒಂದಲ್ಲ ಒಂದು ರಜೆ ವಕ್ಕರಿಸಿಕೊಳ್ಳುತ್ತಲೇ ಇರುತ್ತದೆ. ಹಾಗೇನಾದರೂ ರಜೆ ಸಿಗದೇ ಒಂದೆರಡು ವಾರಗಳಾದವು ಅನ್ನಿ, ಆಗ ಯಾವುದಾದರೂ ಒಂದು ನೆಪದಲ್ಲಿ, ನಮ್ಮ ರಾಜಕೀಯ ಪಕ್ಷಗಳ ಕೃಪಾ ಕಟಾಕ್ಷ ದಲ್ಲಿ ಬಂದೋ, ದೊಂಬಿಯೋ ನಡೆದು ರಜೆ ಸಲೀಸಾಗಿ ಸಿಗುತ್ತದೆ. ಯಡ್ಡಿ ಹತ್ತಿರ ಬಹುಮತ ಸಾಬೀತು ಪಡಿಸಿ ಎಂದರೂ ರಜೆ, ಅಯೋಧ್ಯೆಯ ವಿವಾದ ಕ್ಕೆ ನ್ಯಾಯಾಲಯ ಕೊಡುವ ತೀರ್ಪಿನಂದೂ ರಜೆ.  

ಸೌದಿ ಅರೇಬಿಯಾದ ಹಿಂದಿನ ರಾಜ ಫಹದ್ ರವರು ತೀರಿ ಕೊಂಡ ಸುದ್ದಿ ಬಂದಾಗ ನಾನು ಬ್ಯಾಂಕಿನಲ್ಲಿ ಇದ್ದೆ. ನನ್ನ ಕೆಲಸ ಬೇಗ ಬೇಗನೆ ಪೂರೈಸಿ ಹಾಗೆಯೆ ಅಲ್ಲಿನ ಕ್ಲರ್ಕ್ ಹತ್ತಿರ ಕೇಳಿದೆ, ಎಷ್ಟು ದಿನ ರಜೆ ಕೊಡ್ತಾರೆ ಅಂತ? ಅವನು ಕೇಳಿದ, ರಜೆ? ಯಾವುದಕ್ಕೆ? ನಾನು ದೊರೆಯ ಮರಣದ ವಾರ್ತೆ ಆತನಿಗೆ ಹೇಳಿದಾಗ, ಅವನು ಫಹದ್ ನ ಸಮಯ ಮುಗಿಯಿತು ಅವನು ಸೇರಿಕೊಂಡ ಭಗವಂತನ ಪಾದಚರಣಗಳಿಗೆ, ಅದಕ್ಕೇಕೆ ರಜೆ, ನಿಮ್ ದೇಶದಲ್ಲಿ ಇದಕ್ಕೂ ಕೊಡ್ತಾರ ರಜೆ ಎಂದು ಅವನು ಮರು ಪ್ರಶ್ನೆ ಹಾಕಿದಾಗ ಉತ್ತರಿಸಲಾಗದೆ ಮುಗುಳ್ನಕ್ಕು ಹೊರ ನಡೆದೆ. ಸಾವು ನೈಸರ್ಗಿಕ, ಅದನ್ನು ತಡೆಯಲಾಗಲೀ, ವಿಳಂಬಿಸಲಾಗಲೀ ಯಾರಿಂದಲೂ ಸಾಧ್ಯವಿಲ್ಲ. ಹಾಗೆಯೇ ಯಾರಾದರೂ ಸತ್ತರೂ ಅತಿಯಾಗಿ ಶೋಕ ವ್ಯಕ್ತ ಪಡಿಸಲೂ ಬಾರದು. ಹಾಗೆ ಮಾಡಿದ್ದೇ ಆದರೆ ಅವನಿಗೆ ದೇವನ ನಿರ್ಣಯ ಇಷ್ಟವಾಗಿಲ್ಲ ಎಂದು ಅರ್ಥ. ಇದು ಬಹುತೇಕ ಮುಸ್ಲಿಮರ ಅಭಿಪ್ರಾಯ. ಈಗ ಹೇಳಿ ಬಂದ್ ಕೊಡೋದಾದರೂ ಹೇಗೆ ಸಾಧ್ಯ? ಅಲ್ಲೂ ಬಾರದಂತೆ, ಬಂದ್ ಮಾತು ದೂರ ಉಳಿಯಿತು ಅಲ್ಲವೇ? ಅಲ್ಲಾ, ನಾನು ಮಾತಾಡ್ತಾ ಇದ್ದಿದ್ದು ಜಯಂತಿ ಬಗ್ಗೆ, ಇಲ್ಯಾಕೆ ಮುಖಹಾಕಿದ ಯಮ ಧರ್ಮರಾಯ? ಸಾವೆಂದರೆ ಹೀಗೆಯೇ. ಅಚಾನಕ್ ಆಗಿ ಹೊಂಚು ಹಾಕಿ ಬಿಡುತ್ತದೆ.  

ನಾನು ಹೋದ ವರ್ಷ, ಜುಲೈ ತಿಂಗಳಿನಲ್ಲಿ ಭಾರತಕ್ಕೆ ಬಂದಿದ್ದಾಗ ವಾಲ್ಮೀಕಿ ಜಯಂತಿ. ನಾನು ನನ್ನ ಮಿತ್ರನಿಗೆ ಕೇಳಿದೆ ಇದ್ಯಾವಗಿಂದ ಆರಂಭವಾಯ್ತು ಹೊಸ ಜಯಂತಿ ಎಂದು. ಭಾಜಪ ಸರಕಾರ ಆಲ್ವಾ ಇರೋದು, ಬೇರೆಯವರಿಗಿಂತ ತಾನು ಭಿನ್ನ ಎಂದು ತೋರಿಸಲು ಈ ರಜೆ ಅಂದ. ಇಂದು ಬೆಳಿಗ್ಗೆ ಅವನೊಂದಿಗೆ ಮಾತನಾಡಿದಾಗ ಅವನು ಹೇಳಿದ ರಜೆಯ ಪಟ್ಟಿಗೆ ಇನ್ನಷ್ಟು ಹೆಸರುಗಳು ಸೇರಿಕೊಂಡಿವೆ, ಬಸವ ಜಯಂತಿ, ಕನಕ ಜಯಂತಿ. ವಚನಗಳ ಮಹಾತ್ಮ, ವೀರಶೈವ ಪಂಗಡ ಗುರುಗಳಾದ ಬಸವಣ್ಣರಿಗೆ ಅವರು ಹುಟ್ಟಿದ ದಿನ ಜನ ರಜೆಯಲ್ಲಿ ದಿನ ಕಳೆಯೋದು ಎಷ್ಟು ಪ್ರಿಯವಾದ ವಿಷಯವೋ ನಾ ಕಾಣೆ. ಬಸವ ಜಯಂತಿ ಇವತ್ತು ಎಂದು ಸಂಭ್ರಮ ಪಡುತ್ತಿರುವವರಿಗೆ ಅವರ ಒಂದೇ ಒಂದು ವಚನವನ್ನಾದರೂ ಒದರಲು ಹೇಳಿದರೆ ಅನಾಹುತವಾಗಬಹುದೋ, politically incorrect ಆಗಬಹುದೋ?

ಕನಕ ಜಯಂತಿ ಯಂದು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಗವಾನ್ ಶ್ರೀ ಕೃಷ್ಣನ ಮಂದಹಾಸವನ್ನು ನೋಡಲು ದಲಿತನಿಗೆ ದಾರಿ ಮುಕ್ತವಾಗಿ ತೆರೆದಿರಬಹುದೇ? ಇಂಥ ಪ್ರಶ್ನೆಗಳು ರಜೆಯ ದಿನ ಏಳಲೇ ಬೇಕು, ನಾವದಕ್ಕೆ ಉತ್ತರ ಕಂಡು ಕೊಳ್ಳಲೇ ಬೇಕು. ನನಗೆ ಅದಕ್ಕೆ ಸಮಯವಿಲ್ಲ, ಏಕೆಂದರೆ ನನಗೆ ಇಂಥಾ ರಜೆಗಳ ಸೌಕರ್ಯ ಇಲ್ಲ  ಅಥವಾ ಸೌಭಾಗ್ಯ ಇಲ್ಲ.

ಈ ವೆಬ್ ತಾಣ ನಿಷಿದ್ಧ

عزيزي المستخدم، 

Dear User,

عفواً، الموقع المطلوب غير متاح.

Sorry, the requested page is unavailable.



إن كنت ترى أن هذه الصفحة ينبغي أن لا تُحجب تفضل بالضغط هنا. 

If you believe the requested page should not be blocked please click here.

ಬೇಡದ ವೆಬ್ ತಾಣಕ್ಕೆ ಭೆಟ್ಟಿ ನೀಡುವ ದಾರ್ಷ್ಟ್ಯತನ ತೋರಿದರೆ ಸೌದಿ ಯಲ್ಲಿರುವ ಇಂಟರ್ನೆಟ್ ಇಲಾಖೆ ಈ ಸಂದೇಶವನ್ನು ರವಾನಿಸುತ್ತದೆ. ಧರ್ಮಬಾಹಿರ, ಲೈಂಗಿಕ, ಹಿಂಸಾತ್ಮಕ contents ಇರುವ ತಾಣಗಳನ್ನು ತಡೆ ಹಿಡಿಯುತ್ತಾರೆ. ಹಾಗೇನಾದರೂ ನಿಮಗೆ ಅವರ ತೀರ್ಪಿನ ಬಗ್ಗೆ ತಕರಾರಿದ್ದರೆ ಈ ಮೇಲ್ ಮೂಲಕ  ಸಂಪರ್ಕಿಸ ಬಹುದು. world sex ತಾನವನ್ನು ನನಗಾಗಿ ಬಿಚ್ಚಿ ಕೊಡಪ್ಪ ಎಂದು ಯಾರಾದರೂ “ಮೇಲ್” ಮನವಿ ಸಲ್ಲಿಸಿಯಾರೆ? 
ಒಮ್ಮೆ times of india ತಾಣವನ್ನು ಒಂದು ದಿನದ ಮಟ್ಟಿಗೆ ನಿಷೇಧಿಸಿದ್ದರು. ಆದರೆ ಅಚ್ಚರಿದಾಯಕವಾಗಿ ಸೌದಿಯ ಇಂಟರ್ನೆಟ್ ನಿರ್ಬಂಧ  ನಮ್ಮ ನೆರೆಯ ಚೀನಾದಷ್ಟು ಇಲ್ಲ. ಹಾಗೆಯೇ ಈಗ ನಡೆಯುತ್ತಿರುವ ಈಜಿಪ್ಟ್ ಸರ್ವಾಧಿಕಾರದ ವಿರುದ್ಧದ ಸಮಯ ಅಲ್ಲಿನ ಸರಕಾರ ಅಂತರ್ಜಾಲವನ್ನು ನಿಷೆಧಿಸಿದರೂ ಸೌದಿ ಆ ನಿಲುವನ್ನು ತಾಳಲಿಲ್ಲ. ಅಷ್ಟೊಂದು supremely confident ಇಲ್ಲಿನ ರೂಲರ್ ಗಳು.    

ಪುಟ್ಟ ದೇಶ, ದಿಟ್ಟ ಹೆಜ್ಜೆ

ಟುನೀಸಿಯಾ, ಆಫ್ರಿಕಾ ಖಂಡದ ತುತ್ತ ತುದಿಯಲ್ಲಿ, ಮೆಡಿಟೆರ್ರೆನಿಯನ್ ಸಮುದ್ರದ ತೀರದಲ್ಲಿ ಪ್ರಶಾಂತವಾಗಿ ನಿದ್ರಿಸುವ ಒಂದು ಪುಟ್ಟ ಅರಬ್ ದೇಶ. ಎರಡನೇ ಭಾಷೆ ಫ್ರೆಂಚ್. ಜನಸಂಖ್ಯೆ ಸುಮಾರು ಒಂದು ಕೋಟಿ. ಟುನೀಸಿಯಾದ ಬಗ್ಗೆ ನಾವೇನಾದರೂ ಕೇಳಿದ್ದಿದ್ದರೆ ಅದು ಒಂದು ಪ್ರವಾಸಿ ತಾಣ ಎಂದು ಮಾತ್ರ. ನಮ್ಮ ಗೋವಾ ರೀತಿಯದು.

ದಿನನಿತ್ಯ ದ ಸಾಮಗ್ರಿಗಳ ಬೆಲೆ ವಿಪರೀತ ಏರಿದ್ದು ಮಾತ್ರವಲ್ಲದೆ ನಿರುದ್ಯೋಗ ಸಮಸ್ಯೆಯೂ ಕಿತ್ತು ತಿನ್ನಲು ಆರಂಭಿಸಿದಾಗ ಜನ ಸಿಡಿದೆದ್ದರು ಟುನೀಸಿಯಾದಲ್ಲಿ. ಓರ್ವ ಯುವಕ ಆತ್ಮಹತ್ಯೆ ಮಾಡಿ ಕೊಳ್ಳುವುದರೊಂದಿಗೆ ಪರಿಸ್ಥಿತಿ ಹದಗೆಟ್ಟಿತು. ಅಧ್ಯಕ್ಷ ಜೈನುಲ್ ಆಬಿದೀನ್ ಬಿನ್ ಅಲಿ ತಾನು ಆಳುವ ಜನರ ನಾಡಿಮಿಡಿತ ಅರಿಯಲು ವಿಫಲನಾದ. ಪ್ರತಿಭಟಿಸುತ್ತಿದ್ದ ಜನರನ್ನು ಬಲಪ್ರಯೋಗದ ಮೂಲಕ ಅಡಗಿಸಲು ಯತ್ನಿಸಿದ. ಹತ್ತಾರು ಜನರು ಸತ್ತರು. ಜನ ಜಗ್ಗಲಿಲ್ಲ. ಬೀದಿಗಳಿಂದ ಮನೆಗೆ ಹೋಗಲು ನಿರಾಕರಿಸಿ ಉಗ್ರವಾಗಿ ಪ್ರತಿಭಟಿಸಿದರು. ಭ್ರಷ್ಟ ಲಂಚಗುಳಿ ಅಧ್ಯಕ್ಷನ ಸಂಬಂಧಿಯೊಬ್ಬನನ್ನು ಹಾಡು ಹಗಲೇ ಕೊಲೆ ಮಾಡಿದರು. ಇದನ್ನು ಕಂಡು ಕಂಗಾಲಾದ ಬಿನ್ ಅಲಿ ಕಾಲಿಗೆ ಬುದ್ಧಿ ಹೇಳಿದ. ಫ್ರಾನ್ಸ್ ದೇಶ ಅಭಯ ನೀಡಲು ನಿರಾಕರಿಸಿದಾಗ ಸೌದಿ ಅರೇಬಿಯಾ ಆಶ್ರಯ ನೀಡಿತು. ನೇರವಾಗಿ ಜೆದ್ದಾ ನಗರಕ್ಕೆ ಬಂದ ಬಿನ್ ಅಲಿ. ಉಗಾಂಡಾ ದೇಶದ ಸರ್ವಾಧಿಕಾರಿ ದಿವಂಗತ ಇದಿ ಅಮೀನ್ ಮತ್ತು ಪಾಕಿನ ನವಾಜ್ ಶರೀಫ್ ರಂಥ ಭ್ರಷ್ಟ ಅತಿಥಿ ಗಳಿಗೆ ಆಶ್ರಯ ನೀಡಿದ ಕೆಂಪು ಸಮುದ್ರದ ವಧು, ಜೆಡ್ಡಾ ನಗರ ಬಿನ್ ಅಲಿಯನ್ನೂ ಸ್ವಾಗತಿಸಿತು ತನ್ನ ತೀರಕ್ಕೆ.

ಪ್ರತಿಭಟಿಸುವ ಅಸ್ತ್ರವಾಗಿ ಜೀವವನ್ನು ಕಳೆದು ಕೊಳ್ಳುವುದು ತೀರಾ ಅಪರೂಪ ಮುಸ್ಲಿಂ ಜಗತ್ತಿನಲ್ಲಿ. ಹುಟ್ಟಿಗೆ ಕಾರಣನಾದ ದೇವರೇ ಕಳಿಸಬೇಕು ದೇವದೂತನನ್ನು ಜೀವ ತೆಗೆಯಲು. ಆತ್ಮಹತ್ಯೆ ಮಹಾ ಪಾಪ. ಯಾವುದೇ ಸಮಜಾಯಿಷಿ ಇಲ್ಲ ಜೀವ ಕಳೆದುಕೊಳ್ಳುವ ಕೃತ್ಯಕ್ಕೆ. ಆದರೆ ಮನುಷ್ಯ ಹಸಿದಾಗ, ನಿಸ್ಸಹಾಯಕನಾಗಿ ಗೋಡೆಗೆ ದೂಡಲ್ಪಟ್ಟಾಗ ಧರ್ಮ back seat ತೆಗೆದು ಕೊಳ್ಳುತ್ತದೆ. ಟುನೀಸಿಯಾದಲ್ಲಿ ಆದದ್ದು ಇದೇ. ಬರೀ ಅಧ್ಯಕ್ಷ ಮಾತ್ರ ಭ್ರಷ್ಠನಲ್ಲ. ಈತನ ಮಡದಿ ಸಹ ಮುಂದು ಖಜಾನೆಯ ಲೂಟಿಯಲ್ಲಿ. ಒಂದೂವರೆ ಟನ್ನುಗಳಷ್ಟು ಚಿನ್ನವನ್ನು ತೆಗೆದುಕೊಂಡು ದೇಶ ಬಿಟ್ಟಳು. ಎಲ್ಲಿ ಆಶ್ರಯ ಸಿಕ್ಕಿತು ಎಂದು ಇನ್ನೂ ಗೊತ್ತಿಲ್ಲ. ಜನರ ಹತ್ತಿರ ಕವಡೆಗೆ ಬರ ಬಂದಾಗ ಅಧ್ಯಕ್ಷ, ಅವನ ಪತ್ನಿ, ಅವರಿಬ್ಬರ ಸಂಬಂಧಿಕರು ಐಶಾರಾಮದಿಂದ ಬದುಕುವಾಗ ಸಹಜವಾಗಿಯೇ ಓರ್ವ ನಿಸ್ಸಹಾಯಕ ಯುವಕ ಆತ್ಮಹತ್ಯೆಗೆ ಶರಣಾದ ದಾರಿ ಕಾಣದೆ. ತನ್ನ ಜೀವ ಕಳೆದುಕೊಳ್ಳುವ ಮೂಲಕ ಅರಬ್ ಜಗತ್ತಿನ ಒಂದು ಅಪರೊಪದ ಕ್ರಾಂತಿಗೆ ನಾಂದಿ ಹಾಡಿದ.

೨೩ ವರುಷಗಳ ಕಾಲ ಒಂದೇ ಸಮನೆ ತನ್ನ ದೇಶವವ್ವು ಕೊಳ್ಳೆ ಹೊಡೆದ ಬಿನ್ ಅಲಿ ಪಾಶ್ಚಾತ್ಯ ದೇಶಗಳಿಗೆ ಮಿತ್ರ. ಏಕೆಂದರೆ ಅಲ್ಕೈದಾ ಬಂಟರು ತನ್ನ ದೇಶದಲ್ಲಿ ನೆರೆಯೂರಲು ಈತ ಬಿಡಲಿಲ್ಲ. ಈತ ಬಿಡಲಿಲ್ಲ ಎನ್ನುವುದಕ್ಕಿಂತ ಇಲ್ಲಿನ ಜನ ಶಾಂತಿ ಪ್ರಿಯರು ಎಂದೇ ಹೇಳಬಹುದು. ಬಹುತೇಕ ಅರಬ್ ರಾಷ್ಟ್ರಗಳಲ್ಲಿ ಅಲ್ ಕೈದಾ ದ ಪ್ರಭಾವ ಅಷ್ಟಿಲ್ಲ. ತಮ್ಮ ಆಶಯಗಳಿಗೆ ಅನುಸಾರ ಯಾರಾದರೂ ನಡೆಯುವುದಿದ್ದರೆ ಅಲ್ಲಿ ಪ್ರಜಾಪ್ರಭುತ್ವ, ಸ್ವೇಚ್ಛಾಚಾರ, ಅಭಿವ್ಯಕ್ತಿ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ ಎನ್ನುವ ಮಾರುದ್ದದ ಶಾಪ್ಪಿಂಗ್ ಲಿಸ್ಟ್ ಹಿಡಿದು ಕೊಂಡು ಬರುವುದಿಲ್ಲ ಅಮೇರಿಕಾ ಮತ್ತು ಅದರ ಬಾಲಂಗೋಚಿಗಳು. ಪಶ್ಚಿಮದ ಸಮಯಸಾಧಕತನಕ್ಕೆ ಟುನೀಸಿಯಾ ಸಹ ಹೊರತಾಗಲಿಲ್ಲ. ಈ ತೆರನಾದ ಇಬ್ಬಂದಿಯ ನೀತಿಯ ಪರಿಣಾಮವೇ ೨೩ ವರ್ಷಗಳ ಅವ್ಯಾಹತ ದಬ್ಬಾಳಿಕೆ ಬಿನ್ ಅಲಿಯದು.

ಅರಬ್ ರಾಷ್ಟ್ರಗಳಲ್ಲಿ ಟುನೀಸಿಯಾ ರೀತಿಯ ಕ್ರಾಂತಿಗಳು ಅಪರೂಪ. ಉಣ್ಣಲು, ಉಡಲು, ಸಾಕಷ್ಟಿದ್ದು ಸಾಕಷ್ಟು ಸಂಬಳ ಸಿಗುವ ನೌಕರಿ ಇದ್ದರೆ ಬೇರೇನೂ ಕೇಳದವರು ಅರಬರು. ಅರಬ್ಬರ ಈ ನಡವಳಿಕೆ ನೋಡಿಯೇ ಇಲ್ಲಿ ಸರ್ವಾಧಿಕಾರಿಗಳದು ದರ್ಬಾರು. ಊಳಿಗಮಾನ್ಯ ಪದ್ಧತಿಗೆ ಉದಾಹರಣೆಗಾಗಿ ವಿಶ್ವ ಎಲ್ಲೂ ಪರದಾಡ ಬೇಕಿಲ್ಲ. ಕೊಲ್ಲಿ ಕಡೆ ಒಂದು ಪಿಕ್ ನಿಕ್ ಇಟ್ಟುಕೊಂಡರೆ ಸಾಕು. ಈ ಪ್ರಾಂತ್ಯದಲ್ಲಿ ಪ್ರಜಾಪ್ರಭುತ್ವ ಮೊಳಕೆ ಒಡೆಯುವುದು ಕಷ್ಟದ ಕೆಲಸವೇ.

ಮರಳುಗಾಡಿನಲ್ಲಿ ಹಸಿರು ಮೊಳಕೆಯೊಡೆಯಲು ಸಾಧ್ಯವೇ? ಇಲ್ಲಿನ ನಿಸರ್ಗ, ವಾತಾವರಣ, ಜನರ ನಡಾವಳಿ ಎಲ್ಲವೂ ಪ್ರಜಾಪ್ರಭುತ್ವಕ್ಕೆ ವ್ಯತಿರಿಕ್ತ. ಹಾಗಾಗಿ ನಿರಂಕುಶಾಧಿಕಾರಿಗಳ ದೊಡ್ಡ ದಂಡನ್ನೇ ಕಾಣಬಹುದು ಇಲ್ಲಿ. ಆಫ್ರಿಕಾದಲ್ಲೂ, ಏಷ್ಯಾದಲ್ಲೂ ಇರುವ ಸರ್ವಾಧಿಕಾರಿಗಳಿಗೆ ಹೋಲಿಸಿದರೆ ಇಲ್ಲಿನವರು ನಿರ್ದಯಿಗಳಲ್ಲ. ತಾವು ಹೊಡೆದ ಲೂಟಿಯಲ್ಲಿ ಜನರಿಗೂ ಒಂದಿಷ್ಟನ್ನು ಕೊಡುತ್ತಾರೆ. ಕಾರು ಕೊಳ್ಳಲು ಸಾಲ, ಉನ್ನತ ವ್ಯಾಸಂಗಕ್ಕಾಗಿ ಸಾಲ, ಮನೆ ಕಟ್ಟಲು ಸಾಲ, ಕೊನೆಗೆ ಮದುವೆಯಾಗಲೂ ಕೂಡ ಸಾಲ. ಆಹಾ, ಇಷ್ಟೆಲ್ಲಾ ಸವಲತ್ತಿರುವಾಗ ಗೋಡೆ ತುಂಬಾ ಧಿಕ್ಕಾರ ಗೀಚಿ, ಬೀದಿ ಅಲೆಯುತ್ತಾ ಮೈಕ್ ಹಿಡಿದು ಜಯಕಾರ ಕೂಗಿ ಪ್ರಜಾಪ್ರಭುತ್ವವನ್ನು ಮೆರೆಯುವುದಾದರೂ ಏತಕ್ಕೆ ಹೇಳಿ?

ತಮ್ಮ ಪಾಡಿಗೆ ತಾವು ಲೂಟಿ ಮಾಡುತ್ತಾ, ಒಂದಿಷ್ಟು ಜನಕಲ್ಯಾಣ ಮಾಡಿ ಪಾಪದ ಹೊರೆ ಹಗುರ ಮಾಡಿಕೊಳ್ಳುತ್ತಿದ್ದ ಅರಬ್ ಆಡಳಿತಗಾರರಿಗೆ ಟುನೀಸಿಯಾದ ಬೆಳವಣಿಗೆ ಬೆವರೊಡೆಸಿತು. ಭಯ ಆವರಿಸಿತು. ಅಮ್ಮಾನ್, ಕೈರೋ, ಡಮಾಸ್ಕಸ್, ರಿಯಾದ್ ನಗರಗಳ ಬೀದಿಗಳೂ ಟುನೀಸಿಯಾದ ಬೀದಿಗಳ ಹಾದಿ ಹಿಡಿದರೆ? ಕೂಡಲೇ ಅಗತ್ಯ ವಸ್ತುಗಳ ಬೆಲೆ ತಮಗೆ ತಾವೇ ಇಳಿದವು ಸಿರಿಯಾ ಮತ್ತು ಜೋರ್ಡನ್ ದೇಶಗಳಲ್ಲಿ. ಈ ಎರಡೂ ರಾಷ್ಟ್ರಗಳು ನಿದ್ದೆಯಿಂದ ಎಚ್ಚೆತ್ತು ಕೊಳ್ಳುವ ಪ್ರಯತ್ನ ಮಾಡಿದರೆ ಇವಕ್ಕೆಲ್ಲಾ ಸೊಪ್ಪು ಹಾಕಲಾರೆ ಎನ್ನುವ ಮತ್ತೊಬ್ಬ ಸರ್ವಾಧಿಕಾರಿ ಹೋಸ್ನಿ ಮುಬಾರಕ್. ಈಜಿಪ್ಟ್ ನ ಹೋಸ್ನಿ ಮುಬಾರಕ್ ೩೦ ವರುಷಗಳ ಸುದೀರ್ಘ ಅನುಭವವಿರುವ ಠಕ್ಕ. ಬೇರೆಲ್ಲಾ ಠಕ್ಕರು ಚಾಪೆ ಕೆಳಗೆ ತೂರಿಕೊಂಡರೆ ಈತ ರಂಗೋಲಿ ಕೆಳಗೆ ತೂರಿ ಕೊಳ್ಳುತ್ತಾನೆ. ಆತನಿಗೆ ಅದಕ್ಕೆ ಬೇಕಾದ ಪರಿಣತಿ ಒದಗಿಸಲು ಶ್ವೇತ ಭವನ ಸಿದ್ಧವಾಗಿದೆ ಕರಾಳ ಟ್ರಿಕ್ಕುಗಳೊಂದಿಗೆ.

ಈಗ ಈ ಕ್ರಾಂತಿಯ ಪರಿಣಾಮ ನಾನಿರುವ ಸೌದಿಯಲ್ಲಿ ಹೇಗೆ ಎಂದು ಊಹಿಸುತ್ತಿದ್ದೀರೋ? ಇಲ್ಲಿನ ದೊರೆ ಅಬ್ದುಲ್ಲಾ ಜನರಿಗೆ ಅಚ್ಚು ಮೆಚ್ಚು. ಜನರಿಗೆ ಬೇಕಾದ ಎಲ್ಲಾ ಸೌಕರ್ಯವನ್ನೂ ಮಾಡಿ ಕೊಡುತ್ತಾ, ಇಸ್ಲಾಮಿನ ಎರಡು ಪವಿತ್ರ ಕ್ಷೇತ್ರಗಳಿಗೆ ಸಾವಿರಾರು ಕೋಟಿ ಡಾಲರುಗಳನ್ನು ಅನುದಾನ ನೀಡುತ್ತಾ ಇರುವ ಈ ದೊರೆ ಜನರ ಕ್ಷೇಮ ವನ್ನು ವೈಯಕ್ತಿಕ ಭೇಟಿ ಮೂಲಕ ನೋಡಿ ಕೊಳ್ಳುತ್ತಾರೆ. ಜನರಿಗೆ ಅನ್ಯಾಯವಾದರೆ ಎಂಥ ಪ್ರಭಾವಶಾಲಿಗಳಾದರೂ ಈ ದೊರೆಯ ನಿಷ್ಟುರ ನ್ಯಾಯದಿಂದ ತಪ್ಪಿಸಿ ಕೊಳ್ಳಲಾರರು. ಕಳೆದ ವರ್ಷ ಜೆಡ್ಡಾ ನಗರದಲ್ಲಿ ಮಳೆಯಿಂದ ಆದ ಅಪಾರ ಅನಾಹುತ ೧೫೯ ಜನರ ಪ್ರಾಣ ತೆಗೆದು ಕೊಂಡಿತ್ತು. ಜನರ ಒತ್ತಾಯದ ಮೇರೆಗೆ ಈ ಅನಾಹುತಕ್ಕೆ ನಗರಸಭೆಯ ಅಧಿಕಾರಿಗಳನ್ನು ನೇರವಾಗಿ ಹೊಣೆಯಾಗಿರಿಸಿ ಅವರುಗಳ ಮೇಲೆ criminal ದಾವೆ ಹೂಡಿ ಜೈಲಿಗೆ ಅಟ್ಟಿದರು ಇಲ್ಲಿನ ದೊರೆ. ಟುನೀಸಿಯಾದ ಕ್ರಾಂತಿ ಸೌದಿ ಬ್ಲಾಗಿಗರೂ ಕುತೂಹಲದಿಂದ ವರದಿ ಮಾಡಿದ್ದಾರೆ ಎಂದು ಅಮೆರಿಕೆಯ npr ರೇಡಿಯೋ ದ ಬಾತ್ಮೀದಾರರು ಹೇಳಿದ್ದಾರೆ.

ಸೌದಿ ಅರೇಬಿಯಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಿದ್ದರೂ ಫೇಸ್ ಬುಕ್, ಟ್ವಿಟ್ಟರ್, ಗಳನ್ನು ಬಹಿಷ್ಕರಿಸಿಲ್ಲ. ಈ ಸಾಮಾಜಿಕ ತಾಣಗಳ ಮೂಲಕ ಜನ ತಮ್ಮ ಅಭಿಪ್ರಾಯಗಳನ್ನು ವ್ಯಕ್ತ ಪಡಿಸುತ್ತಿದ್ದಾರೆ. ಕಳೆದ ದಶಕದಿಂದೀಚೆಗೆ ಇಲ್ಲಿನ ವಾರ್ತಾ ಪತ್ರಿಕೆಗಳೂ ಸಹ ಸಾಕಷ್ಟು ಮುಕ್ತವಾಗಿ ವರದಿ ಮಾಡುತ್ತಿವೆ. ಅಮೆರಿಕೆಯ ಕೆಂಗಣ್ಣಿಗೆ ಗುರಿಯಾದ al-jazeera ಟೀವೀ ಮಾಧ್ಯಮ ಕೂಡಾ ಇಲ್ಲಿ ನೋಡಲು ಲಭ್ಯ. ಅದೇ ರೀತಿ ಸೌದಿ ರಾಜ ಮನೆತನಕ್ಕೆ ವಿರುದ್ಧವಾಗಿ ಬರೆಯುವ ಗಾರ್ಡಿಯನ್, independent ಪತ್ರಿಕೆಗಳು ಇಲ್ಲಿ ಲಭ್ಯ. ವಾಣಿಜ್ಯ, ವ್ಯಾಪಾರ ಸಂಬಂಧಕ್ಕೆ ಅವಶ್ಯವಿರುವ ಪ್ರಕ್ರಿಯೆಯಲ್ಲಿ ವಿಶ್ವದಲ್ಲಿ ೧೩ ನೆ ಸ್ಥಾನ ಸೌದ್ ಅರೇಬಿಯಾಕ್ಕೆ. ಮುಕ್ತತೆಗೆ ಆಹ್ವಾನ ನೀಡಿ ಸಾಮಾಜಿಕ ಅನಿಷ್ಟಗಳನ್ನು ತನ್ನ ಮಡಿಲಿಗಿರಿಸಿ ಕೊಂಡಿರುವ ಸಂಯುಕ್ತ ಅರಬ್ ಸಂಸ್ಥಾನಗಳು (UAE) ಮತ್ತು ಬಹರೇನ್ ದೇಶಗಳು ಸೌದಿಗಿಂತ ತುಂಬಾ ಹಿಂದಿವೆ ವಾಣಿಜ್ಯ ನೀತಿಯಲ್ಲಿ.

ಟುನೀಸಿಯಾ ದೇಶಕ್ಕೆ ಭೇಟಿ ಕೊಟ್ಟ ಯಾರೇ ಆದರೂ ಹೇಳುವುದು ಎರಡೇ ಮಾತುಗಳನ್ನು ಸುಂದರ ದೇಶ. ಸ್ನೇಹಜೀವಿ ಜನ. ಪ್ರವಾಸೋಧ್ಯಮದ ಮೂಲಕ ದೊಡ್ಡ ರೀತಿಯಲ್ಲಿ ವಿದೇಶೀ ವಿನಿಮಯ ಗಳಿಸುತ್ತಾ, ತನ್ನ ರಮಣೀಯ ಆಲಿವ್ (olive) ಬಯಲುಗಳನ್ನೂ, ಸುಂದರ ತೀರ ಪ್ರದೇಶವನ್ನೂ ಜನರಿಗೆ ತೋರಿಸಿ ತನ್ನ ಹೊಟ್ಟೆ ಹೊರೆದುಕೊಳ್ಳುತ್ತಿದ್ದ ಪುಟ್ಟ ಟುನೀಸಿಯಾ ದೇಶ ಇಟ್ಟಿರುವ ದಿಟ್ಟ ಹೆಜ್ಜೆ ಅದಕ್ಕೆ ಮುಳುವಾಗದೆ ಇರಲಿ ಎಂದು ಹಾರೈಸೋಣ.

ಹೀಗೇ ಸುಮ್ಮನೆ: ಇಸ್ಲಾಮಿನ flexibility ಯ ದ್ಯೋತಕವಾಗಿ ಟುನೀಸಿಯಾ ದಲ್ಲಿ ಬಹುಪತ್ನಿತ್ವ ನಿಷಿದ್ಧ. ಇದು ಶರಿಯತ್ ಗೆ ವಿರುದ್ಧ ಎಂದು ಇಲ್ಲಿನ ಮುಲಾಗಳು ಇದುವರೆಗೂ ಅರಚಿಲ್ಲ.

ಚಾಕಲೇಟ್ ಕೊಂಡರೆ ಒಂದು ಲೀಟರ್ ಪೆಟ್ರೋಲ್ ಫ್ರೀ

ಚಾಕಲೇಟ್ ಕೊಂಡರೆ ಒಂದು ಲೀಟರ್ ಪೆಟ್ರೋಲ್ ಫ್ರೀ? where?

ಶಾಪ್ಪಿಂಗ್ ಗೆಂದು ಮೊನ್ನೆ ಹೈಪರ್ ಮಾರ್ಕೆಟ್ ಗೆ ಹೋದೆವು. ಬೇಕಾದ ಸಾಮಾನುಗಳನ್ನು ತೆಗೆದುಕೊಂಡ ನಂತರ ನನ್ನ ಮಗಳು ಚಾಕಲೇಟ್ ಸೆಕ್ಷನ್ ಕಡೆ ಓಡಿದಳು. ಅವಳನ್ನು ಹಿಂಬಾಲಿಸಿದ ನಾನು ಸುಮಾರು ೨೦೦ ಮೀಟರ್ ಉದ್ದದ ಚಾಕಲೇಟ್ ಶೆಲ್ಫ್ ಗಳಲ್ಲಿ ಇಟ್ಟಿದ್ದ ತರಾವರಿ ಚಾಕಲೇಟ್ ಗಳನ್ನು ನೋಡುತ್ತಾ ಇದ್ದಾಗ ಒಂದು ಆಫರ್ ಕಣ್ಣಿಗೆ ಬಿತ್ತು. ಆಫರ್ ಇದ್ದದ್ದು ‘ಸ್ನಿಕ್ಕರ್ಸ್’ ಚಾಕಲೇಟ್ ಮೇಲೆ. ಒಂದು ಚಾಕಲೇಟ್ ಬಾರ್ ಕೊಂಡರೆ ಒಂದು ಲೀಟರ್ ಪೆಟ್ರೋಲ್ ಫ್ರೀ. ಹತ್ತಿರ ನಿಂತಿದ್ದ ನನ್ನ ಪತ್ನಿ ಹೇಳಿದಳು ಪಾಪ, ಅಲ್ಲಿ ನಮ್ಮ ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಸಿದ್ದಾರೆ ಎಂದು ಜನ ಸಂಕಟ ಪಡುತ್ತಿದ್ದರೆ ಇಲ್ಲಿ ಅಗ್ಗದ ಪೆಟ್ರೋಲ್ ಸಾಲದು ಎಂದು ಫ್ರೀ ಬೇರೆ ಕೊಡುತ್ತಿದ್ದಾರೆ ಎಂದು ಕನಿಕರ ಪಟ್ಟಳು. ಆದರೆ ಈ ಕೊಡುಗೆಯನ್ನ ಜನ ಉಪಯೋಗಿಸಿ ಕೊಳ್ಳಲಾರರು. ಏಕೆಂದರೆ ಇಲ್ಲಿ ಪೆಟ್ರೋಲ್ ಗೆ ಲೀಟರ್ ಒಂದಕ್ಕೆ ಇಲ್ಲಿನ ೫೦ ಪೈಸ. ಅಂದರೆ ಹೆಚ್ಚು ಕಡಿಮೆ ಆರು ರೂಪಾಯಿಗಳು. ಚಾಕಲೇಟ್ ತಿಂದ ನಂತರ ಅದರ ಕವಚವನ್ನು ಜೋಪಾನವಾಗಿ ಇಟ್ಟುಕೊಂಡು ಪೆಟ್ರೋಲ್ ಹಾಕಿಸಿ ಕೊಳ್ಳುವ ಜಾಯಮಾನದವರಲ್ಲ ಅರಬರು. ಕವಚ ಹಿಡಿದು ಕೊಂಡು ಪೆಟ್ರೋಲ್ ಹಾಕಿಸಿ ಕೊಳ್ಳುವ ಅವಶ್ಯಕತೆ ನನಗಂತೂ ಇಲ್ಲ. ಕಂಪೆನಿಯ ಕಾರು, ಕಂಪೆನಿಯದೆ ಪೆಟ್ರೋಲು. ಯಾರದೋ ದುಡ್ಡು, ಎಲ್ಲಮನ್ ಜಾತ್ರೆ ಥರ. ಹಾಗಾಗಿ ಕವಚ ಸಲೀಸಾಗಿ ತಿಪ್ಪೆ ಸೇರುತ್ತದೆ.  

ಪೆಟ್ರೋಲ್ ಗೆ ಮೊದಲು ಒಂದು ಲೀಟರಿಗೆ ಇಲ್ಲಿನ ಒಂದು ರಿಯಾಲ್ ಇತ್ತು. ಅಂದರೆ ೧೨ ರೂಪಾಯಿ. ಕಳೆದ ವರ್ಷಗಳ ಹಿಂದೆ ದರ ಕಡಿತ ಮಾಡಿ ಆರು ರೂಪಾಯಿಗೆ ಇಳಿಸಿದರು. ಭಾರತದಲ್ಲಿ ‘ದರ ಕಡಿತ’ ಖಾದಿ ಭಂಡಾರ ಬಿಟ್ಟು ಬೇರೆಲ್ಲಾದರೂ ಕಂಡಿದ್ದೀರಾ?  

ಈಗ ಕರುಬದಿರಿ ನನ್ನ ಅದೃಷ್ಟಕ್ಕೆ. ನನ್ನ ‘ಟ್ರಾಲಿ’ ಯಲ್ಲಿರುವ ಒಂದು ಕೆಜಿ ಟೊಮೆಟೋ ಹಣ್ಣಿಗೆ ಭಾರತದ ಎಪ್ಪತ್ತು ರೂಪಾಯಿ ಪೀಕ್ತಾ ಇದ್ದೀನಿ. ಅಕ್ಕಿ ಕೆಜಿಗೆ ನಲವತ್ತಾರು ರೂಪಾಯಿ. ಸಮಾಧಾನ ಆಯಿತೆ? ಟೊಮೆಟೋ ಇಲ್ಲದೆ ಟೊಮೆಟೋ ಗೊಜ್ಜು  ಆಗುವಂತಿದ್ದರೆ? ಅಕ್ಕಿ ಇಲ್ಲದೆ ಅನ್ನ ಆಗುವಂತಿದ್ದರೆ?

ವ್ರತಾಚರಣೆಯ ಮಾಸ

ರಮದಾನ್, (ರಂಜಾನ್ ಎಂದೂ ಕರೆಯಲ್ಪಡುತ್ತದೆ, ramzan) ಇಸ್ಲಾಮೀ ಪಂಚಾಂಗದ ಒಂಭತ್ತನೆ ತಿಂಗಳು ಮತ್ತು ಇಸ್ಲಾಮಿನ ಐದು ಸ್ಥಂಭಗಳಲ್ಲಿ ಮೂರನೆಯ ಸ್ಥಂಭವಾದ ರಮದಾನ್ ತಿಂಗಳಿನಲ್ಲಿ ಜಗತ್ತಿನ ಮುಸ್ಲಿಮರು ದಿನವಿಡೀ ಉಪವಾಸವಿದ್ದು ವಿಶೇಷ ಆರಾಧನೆಯಲ್ಲೂ, ಪವಿತ್ರ ಕುರಾನ್ ಪಾರಾಯಣದಲ್ಲೂ ತಮ್ಮ ಸಮಯ ಕಳೆಯುತ್ತಾರೆ. ಈ ಕಾರಣಕ್ಕಾಗಿ ಈ ಮಾಸವನ್ನು ದಾನದ, ಧ್ಯಾನದ ಮತ್ತು ಚಿಂತನೆಯ ಮಾಸವೆಂದು ಕರೆಯುತ್ತಾರೆ (month of charity, contemplation, and reflection). ಚಂದ್ರ ದರ್ಶನದೊಂದಿಗೆ ಆರಂಭವಾಗುವ ೩೦ ದಿನಗಳ ಈ ಉಪವಾಸ ವ್ರತ ಮುಸ್ಲಿಮ್ ಜಗತ್ತಿಗೆ ಹೊಸ ಚೈತನ್ಯವನ್ನೂ, ಧಾರ್ಮಿಕತೆಯನ್ನೂ ತುಂಬುತ್ತದೆ.

ನಮ್ಮನ್ನು ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸುವುದಕ್ಕೆ, ಪ್ರಾಮುಖ್ಯತೆ ಹೆಚ್ಚು. ಯಾವುದೇ ಪರಿಸ್ಥಿತಿಯಲ್ಲೂ ಐದು ಹೊತ್ತಿನ ನಮಾಜನ್ನು ನಿರ್ವಹಿಸಲೇಬೇಕು. ನಮಾಜ್ ಜೊತೆಗೆ ಕುರಾನ್ ಸೂಕ್ತಗಳನ್ನು ಪಠಿಸುವುದು, ಹಜ್ ಯಾತ್ರೆ, ಇವೂ ಸಹ ಆರಾಧನೆಯಲ್ಲೇ ಒಳಗೊಳ್ಳುತ್ತದೆ. ಆದರೆ ನಮಾಜ್, ಕುರಾನ್ ಪಠಣ, ಹಜ್ ಇತ್ಯಾದಿಗಳು  ತೋರಿಕೆಯ ಆರಾಧನೆಯಾಗಿಯೂ ಮಾರ್ಪಡಬಹುದು. ನಾನು ಧರ್ಮಿಷ್ಠ ಎಂದು ತೋರಿಸಲು ಎಲ್ಲರಿಗೂ ಕಾಣುವಂತೆ ಮಸ್ಜಿದ್ ಗೆ ಹೋಗುವುದು, ಹಜ್ ಯಾತ್ರೆ ಮಾಡುವುದು ಹೀಗೆ. ಆದರೆ ವ್ರತಾಚಾರಣೆ ಹಾಗಲ್ಲ. ಇದೊಂದು ರಹಸ್ಯ ಆರಾಧನೆ. ಉಪವಾಸವಿರುವವನ ಮತ್ತು ಅವನ ಪ್ರಭುವಿಗೆ ಮಾತ್ರ ತಿಳಿಯುವ ಆರಾಧನೆ. ಮೂರನೆಯ ವ್ಯಕ್ತಿಗೆ ಇದರ ಅರಿವಿರುವುದಿಲ್ಲ; ಹಾಗಾಗಿ ವ್ರತಾಚರಣೆಗೆ ಹೆಚ್ಚು ಮಹತ್ವ.    

ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದವರೆಗೆ ಉಪವಾಸದ ಅವಧಿ. ಅರುಣೋದಯದ “ಪ್ರಾರ್ಥನೆಯ ಕರೆ” ( “ಅದಾನ್” ) ಕಿವಿಗೆ ಬಿದ್ದ ಕೂಡಲೇ ಆಹಾರ, ಪಾನೀಯಗಳು ನಿಷಿದ್ಧವಾಗುತ್ತವೆ. ಅದೇ ರೀತಿ ಸೂರ್ಯಾಸ್ತದ ಪ್ರಾರ್ಥನೆಯ ಕರೆ ಕೇಳಿದ ಕೂಡಲೇ ಸ್ವಲ್ಪ ನೀರು ಮತ್ತು ಖರ್ಜೂರದ ಸಹಾಯದಿಂದ ಉಪವಾಸವನ್ನು ಕೊನೆಗೊಳಿಸಲಾಗುತ್ತದೆ. ಇಡೀ ದಿನದ ಉಪವಾಸದಿಂದ ಶರೀರದ ಮೇಲೆ ಹೆಚ್ಚು ವ್ಯತಿರಿಕ್ತ ಪರಿಣಾಮ ಆಗಬಾರದು ಎಂದು ಮಧ್ಯ ರಾತ್ರಿಯ ನಂತರ ಅಥವಾ ಅರುಣೋದಯದ ಸ್ವಲ್ಪ ಮೊದಲು ಸ್ವಲ್ಪವಾದರೂ ಆಹಾರ (ಇದಕ್ಕೆ “ಸುಹೂರ್” ಎಂದು ಕರೆಯುತ್ತಾರೆ) ತೆಗೆದು ಕೊಳ್ಳಲೇಬೇಕು. ಅದೇ ರೀತಿ ದಿನವಿಡೀ ಒಂದು ತೊಟ್ಟೂ ನೀರಿಲ್ಲದೆ, ತಮ್ಮ ದಿನಚರಿಗೆ ಯಾವುದೇ ಧಕ್ಕೆ ಬಾರದಂತೆ ತಮ್ಮ ಕೆಲಸ, ಧಂಧೆ ಮಾಡುತ್ತಾ ಉಪವಾಸವಿದ್ದು ಸೂರ್ಯಾಸ್ತಕ್ಕೆ ಒಂದು ಗುಟುಕು ನೀರು ಮತ್ತು ಒಂದು ತುಂಡು ಖರ್ಜೂರದ ಸಹಾಯದಿಂದ ಉಪವಾಸ ಕೊನೆಗೊಳಿಸುವುದಕ್ಕೆ  “ಇಫ್ತಾರ್” ಎಂದು ಕರೆಯುತ್ತಾರೆ. ಇಫ್ತಾರ್ ಪದವನ್ನು ತಾವು ಕೇಳಿರಲೇಬೇಕು, ನಮ್ಮ ರಾಜಕಾರಣಿಗಳು ಮುಸ್ಲಿಂ ಗೆಳೆಯರಿಗೆ ಏರ್ಪಡಿಸುವ ಔತಣ. ಪ್ರಾಯಕ್ಕೆ ಬಂದ ಪ್ರತೀ ಮುಸ್ಲಿಮ್ ಉಪವಾಸ ವ್ರತ ಆಚರಿಸಲೇಬೇಕು ಎಂದು ಕಡ್ಡಾಯವಾದ ನಿಯಮ. ಖಾಯಿಲೆಯಿಂದ ಬಳಲುವವರಿಗೆ ಮತ್ತು ಯಾತ್ರಿಗಳಿಗೆ ಇದರಿಂದ ವಿನಾಯಿತಿ ಇದ್ದು ಯಾತ್ರೆ ಮುಗಿದ ನಂತರ, ಮತ್ತು ಖಾಯಿಲೆಯಿಂದ ಗುಣಮಮುಖರಾದ ನಂತರ ತಪ್ಪಿಹೋದ ಉಪವಾಸ ದಿನಗಳನ್ನು ಉಪವಾಸ ಇರುವ ಮೂಲಕ ತೀರಿಸಬೇಕು,ಅದೂ ಸಾಧ್ಯವಾಗದಿದ್ದರೆ ತಪ್ಪಿ ಹೋದ ದಿನಗಳಿಗೆ ಪ್ರಾಯಶ್ಚಿತ್ತವಾಗಿ ಬಡ ಬಗ್ಗರಿಗೆ ಅನ್ನದಾನ ಮಾಡಬೇಕು.

ರಮದಾನ್ ಮಾಸದ ಮಹತ್ವದ ಬಗ್ಗೆ ಹೇಳುತ್ತಾ ಪ್ರವಾದಿಗಳು ಹೇಳಿದ್ದು, ರಮದಾನ್ ಮಾಸ ೭೦,೦೦೦ ತಿಂಗಳು ಗಳಿಗೆ ಸಮಾನ ಎಂದು. ಅದೂ ಅಲ್ಲದೆ ಇದೇ ತಿಂಗಳಿನಲ್ಲಿ ಪವಿತ್ರ ಕುರಾನ್ ನ ಸೂಕ್ತಗಳು ಅವತೀರ್ಣವಾಗಿದ್ದು.  ಈ ಕಾರಣಕ್ಕಾಗಿ ಜಗದಾದ್ಯಂತ ಮುಸ್ಲಿಮರು ಈ ತಿಂಗಳ ತಮ್ಮ ಬಿಡುವಿನ ವೇಳೆಯಲ್ಲಿ ಮತ್ತು ಹೆಚ್ಚು ಸಮಯ ಕುರಾನ್ ಪಾರಾಯಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಹಾಗೆಯೆ ಈ ತಿಂಗಳಿನಲ್ಲಿ ರಾತ್ರಿಯಲ್ಲಿ “ತರಾವೀಹ್” ಎಂದು ಕರೆಯಲ್ಪಡುವ ವಿಶೇಷ ಪ್ರಾರ್ಥನೆಗಳು ಸಹ ನಡೆಯುತ್ತವೆ. ಪ್ರತೀ ಆರಾಧನೆ, ದಾನ, ಒಳ್ಳೆಯ ಮಾತು, ಕೃತಿ ಇವುಗಳಿಗೆ ಪ್ರತಿಫಲ ಸಹ ೭೦,೦೦೦ ಪ್ರತಿಫಲದ ರೀತಿಯಲ್ಲಿ ದೇವರು ಕೊಡುವನೆಂದೂ ಮುಸ್ಲಿಮ್ ವಿಧ್ವಾಂಸರು ಹೇಳುತ್ತಾರೆ.      

ರಮದಾನ್ ತಿಂಗಳಿನಲ್ಲಿ ನಾವು ಮಾಡುವ ಪ್ರತೀ ಕೆಲಸವೂ ಇಸ್ಲಾಮೀ ಆದರ್ಶಗಳಿಗೆ ಪೂರಕವಾಗಿರಬೇಕೆಂದು ವಿಧ್ವಾಂಸರುಗಳು ಎಚ್ಚರಿಸುತ್ತಾರೆ. ಈ ಮಾಸದಲ್ಲಿ ಉದ್ರೇಕ ಪಡುವುದಾಗಲೀ,ಕೆರಳುವುದಾಗಲೀ ಮಾಡಬಾರದು. ಹಾಗೇನಾದರೂ ಯಾರಾದರೂ ಉದ್ರೇಕಿಸಿದರೆ “ನಾನು ವ್ರತಾಚರಣೆ ಮಾಡುತ್ತಿದ್ದೇನೆ” ಎಂದು ಹೇಳಿ ಮೌನವಾಗಿರಬೇಕು ಎಂದು ಸಲಹೆ ನೀಡುತ್ತಾರೆ. ಜ್ಞಾನಾರ್ಜನೆ, ಮತ್ತು ಸಂಯಮ ಪಾಲನೆ ರಮದಾನ್ ತಿಂಗಳ ವೈಶಿಷ್ಟ್ಯ ಎನ್ನಬಹುದು. ವ್ರತಾಚರಣೆಯ ಮೂಲಕ ರಮದಾನ್ ತಿಂಗಳು ನಮಗೆ “ಸ್ವ ನಿಗ್ರಹ” ದ ಗುಣವನ್ನೂ, ಸಂಯಮ ಶೀಲತೆಯನ್ನೂ ಕಲಿಸುತ್ತದೆ. ಈ ತೆರನಾದ ನಡವಳಿಕೆ ಮುಸ್ಲಿಮರು ಬರೀ ರಮದಾನ್ ಮಾಸಕ್ಕೆ ಸೀಮಿತಗೊಳಿಸದೆ ತಮ್ಮ ಬದುಕಿನ ಪ್ರತೀ ಘಳಿಗೆಯಲ್ಲೂ ಪಾಲಿಸಿದರೆ ದೇವರು ಯಶಸ್ಸನ್ನು ದಯಪಾಲಿಸುತ್ತಾನೆ ಸಮಾಜಕ್ಕೆ ಆದರ್ಶಪ್ರಾಯನಾಗಿ ಬದುಕುತ್ತಾನೆ.  

ಪ್ರತೀ ಮುಸ್ಲಿಂ ಮನೆಯಲ್ಲೂ ರಮದಾನ್ ಒಂದು ವಿಶೇಷ ತಿಂಗಳಾಗಿರುತ್ತದೆ. ಅದರಲ್ಲೂ ಮಕ್ಕಳಿಗೆ ಒಂದು ರೀತಿಯ ಸಂತಸ. ಐದು ವರ್ಷದ ಮೇಲ್ಪಟ್ಟ ಮಕ್ಕಳೂ ಸಹ ಪೂರ್ತಿ ತಿಂಗಳಲ್ಲದಿದ್ದರೂ ಸಾಧ್ಯವಾದಷ್ಟು ದಿಂದ ಉಪವಾಸ ಆಚರಿಸಲು ಯತ್ನಿಸುತ್ತಾರೆ. ನನ್ನ ಆರು ವರ್ಷದ ಮಗ ಕಳೆದ ಎರಡು ವರ್ಷಗಳಿಂದ ೮ – ೧೦ ದಿನ ಉಪವಾಸವಿದ್ದನು. ಸಂಜೆಯಾಗುತ್ತಿದ್ದಂತೆ ಮಕ್ಕಳು ಕಾತುರದಿಂದ ಮಸ್ಜಿದ್ ಗಳ ಗೋಪುರಗಳು ಹೊರಡಿಸುವ ಅದಾನ್ ಗಾಗಿ ಕಾದು ನಿಂತು “ಅಲಾಹು ಅಕ್ಬರ್” (ದೇವರು ಸರ್ವಶ್ರೇಷ್ಠ ) ಎನ್ನುವುದನ್ನು ಕೇಳುತ್ತಲೇ ಓಡಿ ಬಂದು ಅಮ್ಮಾ, ಅಪ್ಪಾ, ಅದಾನ್ ಆಗುತ್ತಿದೆ, ಬೇಗ ನೀರು ಕುಡಿಯಿರಿ ಎಂದು ಉತ್ತೇಜಿಸುತ್ತಾರೆ.

೩೦ ದಿನಗಳ ಉಪವಾಸ ಮುಗಿದ ನಂತರ ಚಂದ್ರ ದರ್ಶನ ವಾಗುತ್ತಲೇ “ಈದ್” ಸಂಭ್ರಮ ಎಲ್ಲೆಡೆ. ಚಂದ್ರ ದರ್ಶನ ಆಗುತ್ತಲೇ ಮಾರನೆ ದಿನದ ಈದ್ ನಂದು ಯಾರೂ ತಿನ್ನಲು ಇಲ್ಲದೆ ಬಳಲಬಾರದು ಎಂದು ಬಡಬಗ್ಗರಿಗೆ ಅಕ್ಕಿ ದಾನ ಮಾಡುತ್ತಾರೆ. ಈ ದಾನದಿಂದಾಗಿಯೇ ಈದ್ ಹಬ್ಬಕ್ಕೆ “ಈದ್ ಅಲ್ ಫಿತ್ರ್” ಎಂದು ಹೆಸರು.         

ಸೌದಿ ಅರೇಬಿಯಾದಲ್ಲಿ ರಮದಾನ್ ತುಂಬಾ ಸೊಗಸು. ಇಡೀ ತಿಂಗಳು ಮತ್ತು ಅದರ ನಂತರ ಬರುವ ಸುಮಾರು ಹತ್ತು ದಿನಗಳ ಈದ್ ಸಂಭ್ರಮ. ಇಡೀ ನಗರವೇ ಅಲಂಕಾರದಲ್ಲಿ ಮುಳುಗಿರುತ್ತದೆ. ಎಲ್ಲೆಲ್ಲೂ ವಿಶೇಷ offer ಗಳು, ಬಹುಮಾನಗಳು, ರಸ್ತೆ ಬದಿಯಲ್ಲಿ ಉಪವಾಸವಿಟ್ಟುಕೊಂಡು ಪ್ರಯಾಣ ಮಾಡುವವರಿಗೆ ಪುಕ್ಕಟೆ ತಿಂಡಿ ತೀರ್ಥಗಳ ವಿತರಣೆ, ನಿರ್ಗತಿಕರಿಗೆ, ಕೆಳಸ್ತರದ ಉದ್ಯೋಗ ಮಾಡುವವರಿಗೆ ದಾನ ಮಾಡುವಲ್ಲಿ ಪೈಪೋಟಿ, ಹೀಗೆ ನಾನಾ ರೀತಿಯ ಚಟುವಟಿಕೆಗಳನ್ನು ಕಾಣಬಹುದು. ಕೆಲಸದ ಸಮಯವೂ ನಾಲ್ಕು ಅಥವಾ ಐದು ಘಂಟೆಗಳು. ಹಾಗಾಗಿ ಉಪವಾಸವಿರುವುದು ಬಹಳ ಸುಲಭ ಅರೇಬಿಯಾದಲ್ಲಿ.

ಹೀಗೊಂದು ಸಂಭಾಷಣೆ

ಫೋನಿನಲ್ಲಿ ಸಂಭಾಷಣಾ ನಿರತ ಜನ ತಮ್ಮ ಸುತ್ತ ಮುತ್ತ ಇತರೆ ಜನರಿರುತ್ತಾರೆ, ತಮ್ಮನ್ನು ಗಮನಿಸುತ್ತಿರುತ್ತಾರೆ, ನಮ್ಮ ಮಾತುಗಳನ್ನು ಕೇಳುತ್ತಿರುತ್ತಾರೆ ಎನ್ನುವ ಯಾವುದೇ ಪರಿವೆಯಿಲ್ಲದೆ ಸ್ವರ ಏರಿಸಿ ಬಡ ಬಡಿಸುತ್ತಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಸೌಜನ್ಯಗಳ ಬಗ್ಗೆ ಜನರಿಗೆ ಅರಿವನ್ನು ಹೇಗೆ ಮೂಡಿಸ ಬಹುದೋ ಗೊತ್ತಿಲ್ಲ. ಮೊನ್ನೆ ಒಂದು ಚೆಕ್ಕಿನ ಬಗ್ಗೆ ವಿಚಾರಿಸಲು ಸೌದಿ ಅಮೇರಿಕನ್ ಬ್ಯಾಂಕ್ ಗೆ ಹೋದೆ. ಚೆಕ್ vip ವಿಭಾಗಕ್ಕೆ ಸೇರಿದ್ದರಿಂದ ವಿಶಾಲವಾದ, ಸುಸಜ್ಜಿತ vip lounge ನಲ್ಲಿ ಆಸೀನನಾದೆ. ನನ್ನ ಪಕ್ಕದಲ್ಲಿ ಸುಮಾರು ನಲವತ್ತು ನಲವತ್ತೈದರ ಸೌದಿ ಯೊಬ್ಬ ಬರ್ಮುಡಾ ಚಡ್ಡಿ, ಬೇಸ್ ಬಾಲ್ ಟೋಪಿ ಧರಿಸಿ ಫೋನಿನಲ್ಲಿ ಹರಟುತ್ತಿದ್ದ. ಆತನ ಮಾತಿನಿಂದ ತಿಳಿಯಿತು ಅವನೊಬ್ಬ ಅತ್ಯಾಧುನಿಕ, ಸ್ಪೋರ್ಟ್ಸ್ ಮಾಡೆಲ್ ಕಾರುಗಳ ಡೀಲರ್, ಮತ್ತು ಆತನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದವನು ಅಮೆರಿಕೆಯವನು ಎಂದು. ಸೌದಿ ಅವನಿಗೆ ಹೇಳಿದ ಹೌದು ನೀನು ಕೇಳುತ್ತಿರುವ ಕಾರು ನನ್ನ ಹತ್ತಿರ ಇದೆ, ನಾನು ನಾಳೆ ರಿಯಾಧ್ ಗೆ ಬರುತ್ತಿದ್ದೇನೆ, ಬರುವುದು ವಿಮಾನದಲ್ಲಲ್ಲ ನನ್ನ porsche ಕಾರಿನಲ್ಲಿ, ನನಗೆ ಸುಮಾರು ೧೦ ಘಂಟೆಗಳ ಸಮಯ ಹಿಡಿಯಬಹುದು ಎಂದು ಹೇಳುತ್ತಿದ್ದ. ಜೆಡ್ಡಾ ದಿಂದ ರಿಯಾಧ್ ಸುಮಾರು ೧೪೦೦ ಕಿ.ಮಿ. porsche (ಪೋರ್ಷೆ) ಅತಿ ವೇಗವಾಗಿ ಸರಾಗವಾಗಿ ಚಲಿಸಬಲ್ಲ ಕಾರು. ಈ ಸೌದಿ ೧೦ ಘಂಟೆಗಳು ಸಾಕು ರಿಯಾದ್ ತಲುಪಲು ಸಾಕು ಎಂದಾಗ ಅಮೆರಿಕೆಯವ ಹೇಳಿದ ನಿಧಾನವಾಗಿ ಓಡಿಸು ಕಾರನ್ನು, express way ರಸ್ತೆಯಲ್ಲಿ ಅಪಘಾತ ಹೆಚ್ಚು ಎಂದು ಎಚ್ಚರಿಸಿದ. ಅದಕ್ಕೆ ಸೌದಿ ಹೇಳಿದ, ಹೇಯ್ ನೀನೇನು ಭಯ ಪಡಬೇಡ. ನಾನು ಸಣಕಲು ವ್ಯಕ್ತಿ, ಅಪಘಾತವಾದರೂ ಎಲ್ಲಾದರೂ ಮರುಭೂಮಿಯಲ್ಲಿ ಹಾರಿ ಬಿದ್ದಿರುತ್ತೇನೆ, ಆದರೆ ದೊಡ್ಡ ಹೊಟ್ಟೆಯ ಸ್ಥೂಲಕಾಯದವರಾದರೆ ಚಿಂದಿ ಚಿಂದಿ ಆಗುತ್ತಾರೆ (they will go smithereens) ಅಪಘಾತವಾದಾಗ ಎಂದು ಹೇಳುತ್ತಿದ್ದ. ನಮ್ಮ ಮುಂದಿನ ಸೋಫಾದಲ್ಲಿ ಸೂಟು ಬೂಟು ತೊಟ್ಟ ಲೆಬನಾನ್ ದೇಶದವನ ಥರ ಕಾಣುತ್ತಿದ್ದ ಸ್ಥೂಲ ಕಾಯದ ವ್ಯಕ್ತಿಯೊಬ್ಬ ಕುಳಿತಿದ್ದ. ಈಗಾಗಲೇ ಈ ಜೋರಾದ ಸಂಭಾಷಣೆಯಿಂದ ಬೇಸತ್ತಿದ್ದ ಆ ವ್ಯಕ್ತಿ ಈ ಸ್ಥೂಲ ಕಾಯದವರ ಬಗ್ಗೆ ಸೌದಿ ಆಡಿದ ಮಾತಿನಿಂದ ಕುಳಿತಲ್ಲಿಂದಲೇ ಮಿಸುಕಾಡುತ್ತಿದ್ದ. ಹೀಗೆ ಹೇಳಿದ ವ್ಯಕ್ತಿ ಸೌದಿ ಅಲ್ಲದಿದ್ದರೆ ಸರಿಯಾದ ಉತ್ತರ ಕೊಡುತ್ತಿದ್ದನೇನೋ ಪಾಪ ಆ ಡುಮ್ಮ, ಆದರೆ ಈ ಮಾತುಗಳನ್ನ ಕೇಳಿ ಅವನಿಗೆ ಅಲ್ಲಿ ಕೂತಿರಲು ಆಗದೆ ನಿಧಾನವಾಗಿ ತನ್ನ ಶರೀರವನ್ನು ಸೋಫಾದಿಂದ ಆರೋಹಣ ಮಾಡಿ ಕಾಲ್ತೆಗೆದ. ಈ ಸನ್ನಿವೇಶ ನೋಡಿ ನನಗೆ ನಗು ತಡೆಯಲಾಗಲಿಲ್ಲ. ಇಲ್ಲಿಗೆ ನಿಲ್ಲಲಿಲ್ಲ ಪುಕ್ಕಟೆ ಮನರಂಜನೆ, ಸೌದಿಯ ಮಾತು ಇನ್ನೂ ಮುಂದುವರೆದಿತ್ತು. ಅಮೆರಿಕೆಯವ ಹೇಳಿದ ನಾನು feeling lonely in riyadh ಎಂದು, ಅದಕ್ಕೆ ಥಟ್ಟನೆ ಈ ಸೌದಿ ಅವನಿಗೆ ಹೇಳಿದ your lonliness and my kindness might prompt you to do something (ನಿನ್ನ ಒಂಟಿತನ ಮತ್ತು ನನ್ನ ಒಳ್ಳೆಯತನ “ಬೇಡದ್ದನ್ನು” ಮಾಡಲು ನಿನ್ನನ್ನು ಪ್ರೇರೇಪಿಸಬಹುದು) ಹ ಹ ಹಾ ಎಂದು ನಕ್ಕ.

ಸೌದಿ ಅರೇಬಿಯಾದಲ್ಲಿ ಬಂದ್ ಗೆ ಕರೆ

ನಿರಂಕುಶ ರಾಜಪ್ರಭುತ್ವ ಇರುವ, democracy ಎಂದರೆ ಡೈನೋಸಾರಾ ಎಂದು ಗಾಭರಿಯಲ್ಲಿ ಕೇಳುವ ಅರೇಬಿಯಾದಲ್ಲಿ ಎಂಥ ಬಂದ್ ಎಂದಿರಾ? ನಮ್ಮಲ್ಲಿ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಅಥವಾ ವಿರೋಧಪಕ್ಷಗಳವರ ಜೀವ ಸುಟ್ಟು ತಿನ್ನಲು ನೀಡುವ ಕರೆಗೆ ಸ್ವಲ್ಪ ಭಿನ್ನ ಅರೇಬಿಯಾದ ಬಂದ್. ಎಷ್ಟೇ ಗಡಿಬಿಡಿ ಇದ್ದರೂ ನಮ್ಮನ್ನು ಸೃಷ್ಟಿಸಿ ಈ ಭೂಲೋಕಕ್ಕೆ ತಂದ ಆ ದೇವನನ್ನು ಆರಾಧಿಸಲು ಅಂಗಡಿ ಮುಂಗಟ್ಟುಗಳು ಬಂದ್ ಆಚರಿಸುತ್ತವೆ. ಬಹುತೇಕವಾಗಿ ಭಗವಂತನಿಗಾಗಿರುವ ಈ ಬಂದ್ ಸ್ವ-ಪ್ರೇರಣೆಯಿಂದ ನಡೆಯುತ್ತದೆ. ಕೆಲವೊಮ್ಮೆ “promotion of virtue and prevention of vice” department ಗೆ ಸೇರಿದ ಪೊಲೀಸರು (ಇವರನ್ನು “ಹಯ್ಯ” ಎಂತಲೂ ಕರೆಯುತ್ತಾರೆ) ಈ ಕಾನೂನನ್ನು ಜಾರಿ ಗೊಳಿಸುತ್ತಾರೆ. ಇವರ ಕೆಲಸವೇ ಜನರು ಪ್ರಾರ್ಥನೆಗೆ ಹೋಗುವಂತೆ ಮಾಡುವುದು.

ಪ್ರಥಮವಾಗಿ ಸೌದಿ ಅರೇಬಿಯಾಕ್ಕೆ ಬರುವವರಿಗೆ ಇದೊಂದು ವಿಚಿತ್ರ ವಿದ್ಯಮಾನವಾಗಿ ಕಾಣುತ್ತದೆ. ಪ್ರಪಂಚದಲ್ಲಿ ಬೇರಾವುದೇ ಮುಸ್ಲಿಂ ರಾಷ್ಟ್ರಗಳಲ್ಲೂ ಈ ರೀತಿಯ ವ್ಯವಸ್ಥೆಯಿಲ್ಲ. ಒಂದು ರೀತಿಯಲ್ಲಿ ಒಳ್ಳೆಯದೇ ಎಂದು ತೋರಿದರೂ ಬಹಳಷ್ಟು ಜನರಿಗೆ ಒಂಥರಾ ಕಿರಿಕಿರಿ. ಯಾವುದಾದರೂ ಕೆಲಕ್ಕೆಂದು ಹೊರಟರೆ ಆ ಸಮಯ ಪ್ರಾರ್ಥನೆಯ ಸಮಯವಾಗಿರುತ್ತದೆ. ಅದರಲ್ಲೋ ಚಳಿ ಗಾಳದಲ್ಲಿ ಸಂಜೆಯ ಮತ್ತು ರಾತ್ರಿಯ ಪ್ರಾರ್ಥನೆಗಳ ಮಧ್ಯೆ ಕೇವಲ ಒಂದು ಘಂಟೆಯ ಅಂತರ. ಅಂಥ ಸಮಯದಲ್ಲಿ ರಾತ್ರಿಯ ಪ್ರಾರ್ಥನೆ ಮುಗಿದ ನಂತರವೇ ಶಾಪಿಂಗ್ ಹೋಗುವುದು ಲೇಸು. ಜೆಡ್ಡಾ ರಾತ್ರಿ ಬದುಕಿಗೆ ಖ್ಯಾತ. ಬಹುತೇಕ ಅಂಗಡಿಗಳು ಮಧ್ಯ ರಾತ್ರಿ ವರೆಗೆ ತೆರೆದಿರುತ್ತವೆ, ಕೆಲವೊಂದು ಸೂಪರ್ ಮಾರ್ಕೆಟ್ ಗಳು ೨೪ ಘಂಟೆಯೂ ತೆರೆದಿರುತ್ತವೆ. ಹೀಗೆ ಪ್ರಾರ್ಥನೆಗೆಂದು ಅಂಗಡಿ ಮುಂಗಟ್ಟುಗಳು ಮುಚ್ಚುವ ಪರಿಪಾಠ ಕೆಲವರಿಗೆ ಬೇಸರ, ಕೋಪ ತರಿಸುತ್ತದೆ. any time is prayer time here ಎಂದು ಒಬ್ಬ ಬಿಳಿಯ ಅಸಹನೆಯಿಂದ ನನ್ನಲ್ಲಿ ಹೇಳಿದ. ಅವನೇಕೆ ನನ್ನ ಆರು ವರ್ಷದ ಮಗನೂ ಮೊನ್ನೆ ಇದೇ ರೀತಿಯ ಮಾತನ್ನಾಡಿದ. ಜರೀರ್ ಪುಸ್ತಕದಂಗಡಿ ನೋಡಿದಾಗೆಲ್ಲಾ ಅಪ್ಪ, ಜರೀರ್ ಗೆ ಹೋಗೋಣ ಬಾ (ಜರೀರ್ ಇಲ್ಲಿನ ಸುಪ್ರಸಿದ್ಧ ಪುಸ್ತಕ ಮಳಿಗೆ) ಎಂದು ಗೋಗರೆದಾಗ ಆ ಸಮಯ ಪ್ರಾರ್ಥನೆಯ ಸಮಯವಾಗಿರುತ್ತದೆ. i dont like salah, every day is salah time ಎಂದು ತನ್ನ ತನ್ನ ಹರುಕು ಮುರುಕು ಆಂಗ್ಲ ಭಾಷೆಯಲ್ಲಿ ಸಿಡಿದೇಳುತ್ತಾನೆ. ನನಗೆ “ಸಲಾ” ಇಷ್ಟವಿಲ್ಲ, ಯಾವಾಗ ನೋಡಿದರೂ ಸಲಾ ಸಮಯ ಎಂದು ಅವನು ಹೇಳುವ ರೀತಿ ಇದು.

“ಸಲಾ” ಎಂದರೆ ಅರಬಿ ಭಾಷೆಯಲ್ಲಿ “ಆರಾಧನೆ”. ನಾವು ನಮಾಜ್ ಎಂದು ಹೇಳುತ್ತೆವಲ್ಲ, ಅದು. ಸಲಾ ಎನ್ನುವ ಪದ “ಸಿಲ್” ಎನ್ನುವ ಪದದಿಂದ ಬಂದಿದ್ದು ಮತ್ತು “ಸಿಲ್” ಎಂದರೆ ಸಂಪರ್ಕ ಅಂತ. ವಾಹ್, ನಮ್ಮನ್ನು ಮಣ್ಣಿನಿಂದ ಸೃಷ್ಟಿಸಿ, ದೇವದೂತರಿಂದ ನಮಗೆ ಸಾಷ್ಟಾಂಗ ಮಾಡಿಸಿ ಅವನ ಉತ್ತಾರಾಧಿಕಾರಿಯಾಗಿ ಭೂಲೋಕ ಆಳಲು ಕಳಿಸಿದ ಪರಮಾತ್ಮನೊಂದಿಗೆ ಸಂಪರ್ಕ. ನೇರ ಸಂಪರ್ಕ. ಯಾರ ಮಧ್ಯಸ್ಥಿಕೆಯೂ ಇಲ್ಲದ ನೇರ ಒಡನಾಟ.ಇಂಥ ಪರಮಾತ್ಮನಿಗೆ ಸಾಷ್ಟಾಂಗ ಎರಗಲು ಸಮಯ ನಿಗದಿ ಪಡಿಸಿದರೆ ನಮ್ಮ ಶಾಪ್ಪಿಂಗ್ ತೆವಲಿಗೆ ಇದು ಅಡ್ಡ ಎಂದು ಅದರ ವಿರುದ್ಧ ನಮ್ಮ ತಗಾದೆ.

ನೀವು ಶಾಪಿಂಗ್ ಮಾಡುತ್ತಿರುವಾಗ ನಮಾಜಿನ ಕರೆ ಮೊಳಗಿದರೂ ನಿಮ್ಮನ್ನು ಹೊರಗಟ್ಟುತ್ತಾರೆ. ನೀವು ಗೋಣಿ ಚೀಲ ಭರ್ತಿ ರೊಕ್ಕ ಇಟ್ಟುಕೊಂಡು ಹೋಗಿದ್ದರೂ ಆ ಹಣ ಅಂಗಡಿಯವನಿಗೆ ಬೇಡ. ಮೊದಲು ಪ್ರಾರ್ಥನೆ ನಂತರ ನಿನ್ನ ವ್ಯಾಪಾರ ಎನ್ನುತ್ತಾರೆ. ಅಷ್ಟೊಂದು ಭಯ ಕಾನೂನಿನದು. ಪೊಲೀಸರು ಬಂದರೆ ಸರಿಯಾದ ದಂಡ ವಿಧಿಸುತ್ತಾರೆ ಎಂದು ಭಯ. ಕೆಲವೊಮ್ಮೆ ನನಗೂ ಅನ್ನಿಸುವುದುಂಟು. ಭಗವಂತನ ಆರಾಧನೆಗೆ ಮೂರನೆಯವರ ಬಲವಂತ ಏಕೆ ಎಂದು.

ಜೆಡ್ಡಾದಲ್ಲಿ ಸಾರಿಗೆ ತಡೆ ಸಿಕ್ಕಾಪಟ್ಟೆ. ಎಲ್ಲರ ಹತ್ತಿರವೂ ಕಾರು. ಇಲ್ಲದೆ ಏನು, ಪೆಟ್ರೋಲ್ ಒಂದು ಲೀಟರ್ ಗೆ ಇಲ್ಲಿನ ೪೫ ಪೈಸ (ಭಾರತದ ಐದು ರೂಪಾಯಿಗಿಂತ ಕಡಿಮೆ). ಕಾರನೂ ಸಾಕುವುದು ಸುಲಭ ತಾನೇ. ಹೀಗೆ ಈ ಟ್ರಾಫಿಕ್ ಅನ್ನು ದಾಟಿಕೊಂಡು ಅಂಗಡಿ ಸೇರಿದೆವು ಅನ್ನುವಷ್ಟರಲ್ಲಿ ಸಲಾ ಟೈಂ. ಕೆಲವೊಮ್ಮೆ ಶಾಪಿಂಗ್ ಮಧ್ಯೆ ನಮಾಜಿನ ಸಮಯವಾದರೂ ನಿರ್ದಾಕ್ಷಿಣ್ಯದಿಂದ ಹೊರಗಟ್ಟುತ್ತಾರೆ. ಆದರೆ ಎಲ್ಲಾ ಮಾಲುಗಳಲ್ಲೂ, ಇನ್ನಿತರ ಸ್ಥಳಗಳಲ್ಲೂ ಆರಾಧನೆಗೆ ವಿಶೇಷ ಸೌಲಭ್ಯವಿದೆ. ಏನಿಲ್ಲವೆಂದರೂ ಪ್ರತಿಯೊಬ್ಬರ ಕಾರಿನಲ್ಲಿ ಚಿಕ್ಕ ಕಂಬಳಿ (prayer rug) ಇರುತ್ತದೆ. ಎಲ್ಲಿ ನಿಂತಿರುತ್ತಾರೋ ಅಲ್ಲೇ ಹಾಸಿ ಭಗವಂತನ ಸ್ತುತಿ ಮಾಡುತ್ತಾರೆ.      

ಒಮ್ಮೆ ನಾನು ನನ್ನ ಸೋದರಿಯ ಟಿವಿ ರೆಪೇರಿ ಮಾಡಿಸಲೆಂದು “ಬಲದ್” ಎಂದು ಕರೆಯಲ್ಪಡುವ ಜೆಡ್ಡಾ ನಗರದ ಪ್ರಮುಖ ಆಕರ್ಷಣೆಯ ವಲಯಕ್ಕೆ ಹೋದೆ. ಆಗ ತಾನೇ ಸೂರ್ಯ ಅಸ್ತಮಿಸುತ್ತಿದ್ದ. ಸೂರ್ಯಾಸ್ತಮಾನದ ಪ್ರಾಥನೆಯ ಸಮಯ ಇನ್ನೂ ಸ್ವಲ್ಪ ಹೊತ್ತಿನಲ್ಲಿ ಶುರು ಆಗುವುದರಲ್ಲಿತ್ತು. ಅಷ್ಟರಲ್ಲೇ ಅಂಗಡಿ ತಲುಪಿದ ನಾನು ಅಂಗಡಿಯವನಿಗೆ ಟಿವಿ ಒಪ್ಪಿಸಿ ಬೇಕಾದ ಕಾಗದ ಅವನಿಂದ ಪಡೆದು ಅಂಗಡಿ ಹೊರಗೆ ಕಾಲಿಡುವಷ್ಟರಲ್ಲಿ ಬಂದರು ಪೊಲೀಸರು. ಅಂಗಡಿಯ ಮುಂದೆ ಜೀಪ್ ನಿಲ್ಲಿಸಿದ್ದೆ, ಧಡ ಧಡ ಇಳಿದು ನನ್ನನ್ನೂ, ಅಂಗಡಿಯ ಬಾಗಿಲು ಹಾಕುತ್ತಿದ್ದವನನ್ನೂ, ಇನ್ನಿಬ್ಬರನ್ನೂ ಜೀಪ್ ಹತ್ತಿಸಿದರು. ನಾವು ಪ್ರಾಥನೆಗೆ ಹೋಗಲೇ ಹೊರಟಿದ್ದು ಎಂದು ಹೇಳಿದರೂ ಕೇಳದೆ ನಮ್ಮಿಂದ ನಮ್ಮ ಗುರುತು ಚೀಟಿ ಪಡೆದುಕೊಂಡು ಓಡಿಸಿದರು ಜೀಪನ್ನು ಹತ್ತಿರದಲ್ಲೇ ಇದ್ದ ಮಸೀದಿಗೆ. ನನ್ನೊಂದಿಗೆ ಇದ್ದ ನಮ್ಮ ಆಫೀಸಿನ ಹುಡುಗನೊಬ್ಬ ಹೆದರಿ ಈಗೇನಾಗಬಹುದು ಎಂದು ಕಣ್ ಸನ್ನೆಯಿಂದ ಕೇಳುತ್ತಿದ್ದ. ಪಾಪ ಅವನು ಭಾರತದಿಂದ ಬಂದ ಹೊಸತು. ಎಂಥ ಸ್ವಾಗತ ಸಿಕ್ಕಿದೆ ಇವನಿಗೆ ಎಂದು ನನಗೆ ಒಂದು ಕಡೆ ನಗು, ಮತ್ತೊಂದು ಕಡೆ ಕನಿಕರ. ನನಗಂತೂ ಇಂಥವನ್ನು ಕೇಳಿ, ಓದಿ ಸಾಕಷ್ಟು ಪರಿಚಯವಿತ್ತು. ನಾವೇನೂ ಕಳ್ಳ ಕಾಕರಲ್ಲವಲ್ಲ. ಭಯ ಏಕೆ ಎಂದು ಅವರು ತಂದು ಬಿಟ್ಟ ಮಸೀದಿಯ ಬಳಿ ಇಳಿದೆ. ಪೊಲೀಸ್ ಜೀಪಿನಿಂದ ಇಳಿದ ನಮ್ಮನ್ನು ನೋಡಲು ಜನರಿಗೆ ಒಂಥರಾ ಮೋಜು. ಆಹಾ, ನಮಾಜ್ ಮಾಡದೆ ಅಡ್ಡಾಡುತ್ತೀರಾ  ಎಂದು ತುಂಟತನದಿಂದ ನಮ್ಮೆಡೆ ನೋಟ ಬೀರಿ ನಗುತ್ತಿದ್ದರು. ಒಂದು ರೀತಿಯ ಅವಮಾನ ತಾನೇ? ನಮಾಜಿನ ಸಮಯದಲ್ಲಿ ನಮಾಜ್ ಮಾಡುವುದು ಬಿಟ್ಟು ಟಿವಿ ರೆಪೇರಿ, ಮತ್ತೇನೋ ಕೆಲಸ. ಸರಿ ನಾವು ಓಡಿ ಹೋಗದಂತೆ ನಮ್ಮ ಗುರುತಿನ ಚೀಟಿ ಜಪ್ತಿ ಆಗಿದೆಯಲ್ಲ. ನಾವು ನಮಾಜ್ ಮಾಡಿ ಜೀಪಿನ ಹತ್ತಿರ ಬಂದು ಪೊಲೀಸರೊಂದಿಗೆ ನಮ್ಮ ಯಾತ್ರೆ ಠಾಣೆಯ ಕಡೆ. ನಮಾಜ್ ಮಾಡಿಸಿ ಸುಮ್ಮನೆ ತಾಂಬೂಲ ಕೊಟ್ಟು ಕಳಿಸುವುದಿಲ್ಲ. ಠಾಣೆಗೆ ಹೋಗಬೇಕು. ಸರಿ ಠಾಣೆ ತಲುಪಿದೆವು. ಅಲ್ಲಿದ್ದ ಅಧಿಕಾರಿ ಸೌಮ್ಯವಾದ ಸ್ವರದಲ್ಲಿ ಕೇಳಿದ ನಮಾಜ್ ಮಾಡಲು ಎಂದು ಧಾಡಿ ಎಂದು. ನಾವು ನಮ್ಮ ಕಾರಣವನ್ನು ಹೇಳುತ್ತಿದ್ದಂತೆ ಅದೇನನ್ನೋ ಅರಬ್ಬೀ ಭಾಷೆಯಲ್ಲಿ ಬರೆದು ಸಹಿ, ಹೆಬ್ಬಟ್ಟು ಒತ್ತಿಸಿಕೊಂಡು ಬಿಟ್ಟರು. ಯಾರೋ ಹೇಳಿದರು ಈ ರೀತಿ ಮೂರು ಬಾರಿ ನಮ್ಮ ಹೆಸರು ದಾಖಲಾದರೆ ಗಡೀಪಾರಂತೆ. ನಮ್ಮ ಕಾರಿನಿಂದ ಬಹು ದೂರ ಬಂದಿದ್ದೆವು. ಅವರೇನು ನಮ್ಮನ್ನು ಕರೆತಂದ ಸ್ಥಳಕ್ಕೆ ಬಿಡಲು ಅವರ ಬೀಗರೇ ನಾವು? ಟ್ಯಾಕ್ಸಿ ಹಿಡಿದು ನನ್ನ ಕಾರಿರುವ ಸ್ಥಳಕ್ಕೆ ಬಂದೆ. ಇಷ್ಟು ಸುಲಭವಾಗಿ ಸಮಸ್ಯೆ ಪರಿಹಾರವಾಗಿದ್ದು ನಮ್ಮ ಪುಣ್ಯವೆಂದೇ ಹೇಳಬೇಕು. ಮತ್ತೇನು ನೇಣು ಹಾಕುತ್ತಿದ್ದರಾ ಎಂದು ಕೇಳಬೇಡಿ. ನಮಾಜ್ ಮಾಡಿಸಿ, ಠಾಣೆಗೆ ತಂದ ನಂತರ ಕೆಲವು ತಲೆ ಕೆಟ್ಟ ಪೊಲೀಸರು ಅವರದೇ ಆದ ರೀತಿಯಲ್ಲಿ ರಾಟೆ ಏರಿಸುತ್ತಾರೆ. ಅಂದರೆ ನಿಮಗೆ ನಮಾಜ್ ಗೊತ್ತಲ್ಲ. ನಿಲ್ಲುವುದು, ಬಾಗುವುದು, ಸಾಷ್ಟಾಂಗ ಎರಗುವುದು, ನಂತರ ಮಗುದೊಮ್ಮೆ ನೇರವಾಗಿ ನಿಲ್ಲುವುದು. ಒಂದು ರೀತಿಯ ಶಾಸ್ತ್ರೀಯ ನೃತ್ಯ, ಕ್ಷಮಿಸಿ ಶಾಸ್ತ್ರೀಯ ಭಸ್ಕಿ. ಹೀಗೆ ಮೂರು ಸಲ ಆವರ್ತಿಸಿದಾಗ ಸೂರ್ಯಾಸ್ತಮಾನದ ನಮಾಜ್ ಮುಗಿದಂತೆ.  ಈ ರೀತಿಯ ಬಾಗುವುದು, ಏಳುವುದು ಈ ಸರ್ಕಸ್ಸನ್ನು ಸುಮಾರು ಐವತ್ತೋ, ನೂರೋ ಸಲ ಮಾಡಿಸಿ ಬಿಡುತ್ತಾರೆ. ಅದಾದ ಮೇಲೆ ಆಗುವ ಗತಿ ಗೊತ್ತೇ ಇದೆಯಲ್ಲ, ಅನುಭವ ಚಿತ್ರದಲ್ಲಿ ಕಾಶೀನಾಥ್ ಹುಡುಗಿಯರನ್ನು ಪಟಾಯಿಸಲು ಬಾಡಿ ಬಿಲ್ಡ್ ಎಂದು ಭಸ್ಕಿ ಜೋರಾಗಿ ಹೊಡೆದು ನಡೆದ ಶೈಲಿ. ಆ ಗತಿ ನಮಾಜ್ ಮಾಡದವನಿಗೆ. ದೇವರಾದರೂ ಕನಿಕರ ತೋರಿಸಿಯಾನು, ಪೊಲೀಸರು ತೋರಿಸುವುದಿಲ್ಲ.

ಜನರಿಂದ ನಮಾಜ್ ಮಾಡಿಸಿದ ಈ ಪೊಲೀಸರು ಬಿಡುವಿದ್ದರೆ ಮಾಲ್ ಗಳಿಗೆ ಹೋಗುತ್ತಾರೆ ಚೇಷ್ಟೆಗೆಂದು ಬರುವ ಪಡ್ಡೆ ಹುಡುಗ ಹುಡುಗಿಯರಿಗಾಗಿ. ಸ್ವಲ್ಪ ಅನುಮಾನ ಕಂಡರೂ ಸಾಕು ಅವರನ್ನು ಕರೆದು ತಾಕೀತು ಮಾಡುತ್ತಾರೆ, ಇಲ್ಲಾ ಭಸ್ಕಿ ಹೊಡೆಸಿ ಗೋಳು ಹೊಯ್ದುಕೊಳ್ಳುವ ಪೋಲೀಸರಾದರೆ ಅಪ್ಪಂದಿರನ್ನು ಕರೆಸುತ್ತಾರೆ ಠಾಣೆಗೆ. ಜನ್ಮ ಕೊಟ್ಟರೆ ಸಾಲದು, ಸರಿಯಾಗಿ ಸಾಕಬೇಕು ಎಂದು ಬುದ್ಧಿ ಹೇಳಲು. ಇವರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ, ಏಕೆಂದರೆ ಇವರ ವಿರುದ್ಧ ನೀವು ನ್ಯಾಯಾಲಯದ ಮೆಟ್ಟಿಲು ಹತ್ತಿದರೂ ಪ್ರಯೋಜನವಿಲ್ಲ, ನ್ಯಾಯ ಹೇಳುವವನೂ ಇವರ ವರ್ಗಕ್ಕೇ ಸೇರಿದವನು. 

ಒಮ್ಮೆ ನಗರದ ಮಧ್ಯ ಭಾಗದಲ್ಲಿರುವ ಹಿರಾ ಮಾಲ್ನಲ್ಲಿ ಅಡ್ಡಾಡುತ್ತಾ ಇರುವಾಗ ಕಂಡಿದ್ದು. ನಾಲ್ಕು ಜನ ಹುಡುಗರು ಬೆರ್ಮುಡ, ಉದ್ದದ ಕೂದಲು, ಕೊರಳಿಗೆ ಸರ, ಕೈಗೆ ಕಡಗ ಹೀಗೆ ಒಂದು ಥರಾ ಜಿಪ್ಸಿ ಗಳ ಥರಾ ನಡೆಯುತ್ತಿದ್ದರು. ಆಗಮನವಾಯಿತು ಈ ಪೊಲೀಸರದು.  ಸಮಾಜದಲ್ಲಿ ನೈತಿಕತೆ ಕಾಪಾಡಲು ನಿಯಮಿಸಲ್ಪಟ್ಟ “ಮುತಾವಾ”ಗಳು. ಆ ಹುಡುಗರನ್ನು ನಿಲ್ಲಿಸಿ ಶುರು ಮಾಡಿದರು ಪ್ರಶ್ನೆಗಳನ್ನು. ಕೂದಲು ಹೀಗೇಕೆ ಬಿಟ್ಟಿದ್ದೀಯ, ಇದೇನು ನಿನ್ನ ಅವತಾರ, ನೀವೆಲ್ಲಿ ವಾಸವಾಗಿದ್ದೀರಾ….. ಹುಡುಗರು ಭಯದಿಂದ ಕೇಳಿದ ಪ್ರಶ್ನೆಗಳಿಗೆ ತಡಬಡಿಸಿ ಉತ್ತರಿಸಿ ಇನ್ನು ಈ ವೇಷದಲ್ಲಿ ನಾವು ಅಡ್ಡಾಡುವುದಿಲ್ಲ ಎಂದು ಹೇಳಿ ಅವರ ಕೈಗಳಿಂದ ತಪ್ಪಿಸಿಕೊಂಡರು. ಕೆಲವೊಮ್ಮೆ ಇಷ್ಟರಲ್ಲೇ ನಿಲ್ಲುತ್ತದೆ ಈ ವಿಚಾರಣೆ, ಒಂದಿಷ್ಟು ಕೌನ್ಸೆಲಿಂಗ್ನೊಂದಿಗೆ. ಒಂದು ದಿನ ನಾನು ನನ್ನ ಶ್ರೀಮತಿ ಮಕ್ಕಾದ ಮಸೀಯಿಂದ ಹೊರ ನಡೆಯುತ್ತಿದ್ದಾಗ ಬಂದ ಇಂಥದ್ದೇ ಒಬ್ಬ ಪೋಲೀಸಪ್ಪ. ನನ್ನನ್ನು ತಡೆದು ನಿನ್ನ ಪತ್ನಿಯೇಕೆ perfume ಧರಿಸಿದ್ದಾಳೆ ಎಂದು. ನೀನೆಕಪ್ಪ ನನ್ನ ಹೆಂಡತಿಗೆ ಮೂಗು ತಾಗಿಸಿದ್ದು ಎಂದು ಕೇಳಲು ಮನಸ್ಸಾದರೂ ನಿನ್ನ ಮೂಗಿಗೆ ಬಡಿದಿದ್ದು ನನ್ನ Mont Blanc ಪರ್ಫ್ಯೂಂ ಎಂದು ಹೇಳಿ ಮುಂದೆ ನಡೆದೆ. ಸ್ತ್ರೀಯರು ಸುಗಂಧ ದ್ರವ್ಯ ಹಚ್ಚಿಕೊಳ್ಳಬಾರದು, ಅದು ಪರ ಪುರುಷರಿಗೆ open invitation.

ಕೆಲವೊಮ್ಮೆ ನವಿರಾಗಿ ವರ್ತಿಸುವ “ಮುತಾವಾ” ಎಂದೂ ಕರೆಯಲ್ಪಡುವ ಈ ಸಮಾಜ ಸುಧಾರಕರಿಂದ  ಸಮಾಜಕ್ಕೇನೋ ಒಳ್ಳೆಯದೇ. ಇಲ್ಲಿನ ನಿಯಮಿತ ಸ್ವಾತಂತ್ರ್ಯದ ಚೌಕಟ್ಟಿನೊಳಗೆ ಅನಿಯಮಿತವಾಗಿ ವರ್ತಿಸುವ ಯುವ ವರ್ಗಕ್ಕೆ, ಯೌವ್ವನದ ಎಗ್ಗಿಲ್ಲದ ರಭಸಕ್ಕೆ  ತಡೆ ಒಡ್ಡುವ ಇಂಥ road hump ಗಳು ಅವಶ್ಯಕ.

ಸೌದಿ ಅರೇಬಿಯಾದಲ್ಲಿ ಆಗುವ ಭಗವಂತನ ನಾಮ ಸ್ಮರಣೆ ಬೇರಾವ ದೇಶದಲ್ಲೂ ಆಗಲಿಕ್ಕಿಲ್ಲವೇನೋ. ರಸ್ತೆ ಬದಿಯಲ್ಲಿ, ಬ್ಯಾಂಕಿನಲ್ಲಿ ಸರತಿಯಲ್ಲಿ ನಿಂತಾಗ, ಜಾಹೀರಾತಿನ ಮಧ್ಯೆ ಹೀಗೆ ಎಲ್ಲೆಡೆ ದೇವರನ್ನು ಸ್ಮರಿಸಲು, ಕೊಂಡಾಡಲು ಕರೆ. ಹೀಗೆ ಸದಾ ದೇವನಾಮ ಸ್ಮರಣೆ ಮಾಡುವ ಸಮಾಜ ಅದೇ ದೇವನ ಆದೇಶವನ್ನು ಕಡೆಗಣಿಸುವುದರಲ್ಲೂ ಮುಂದು ಎಂದರೆ ನಿಮಗೆ ಅಚ್ಚರಿ ಆಗಬಹುದು. ಈ ದ್ವಂದ್ವ ನಮಗೆ ಹೇರಳವಾಗಿ ಈ ಮರಳುಗಾಡಿನಲ್ಲಿ ಕಾಣಲು ಸಿಗುತ್ತದೆ.

ಹೀಗೊಂದು ಜಾಹೀರಾತು

ಸೌದಿ ಅರೇಬಿಯಾದ ಜೆಡ್ಡಾ  ದ ನಗರದಲ್ಲಿ ಕಾಣ ಸಿಕ್ಕಿದ ಜಾಹೀರಾತು. ಡ್ರೈವ್ ಮಾಡುತ್ತಾ ಹೋಗುತ್ತಿದ್ದಾಗ ಈ ಚಿತ್ರ ನೋಡಿದ ಕೂಡಲೇ ನನಗನ್ನಿಸಿದು ಇದೇನೋ ಅಪ್ಪಿ ತಪ್ಪಿ ಅರಿವಿಲ್ಲದೆ ಬಂದು ಬಿಟ್ಟಿದೆ, ಯಾವುದೋ ಹಳೆಯ ಮಲಿನವಾದ ಚಿತ್ರವಿರಬೇಕು ಎಂದು. ನನ್ನ ಗ್ರಹಿಕೆ ಸುಳ್ಳಾಯಿತು ಎಂದು ಸ್ವಲ್ಪ ದೂರ ಒಂದು ರೌಂಡ್ ಅಬೌಟ್ (ಸರ್ಕಲ್) ಸಿಕ್ಕ ಕೂಡಲೇ ತಿಳಿಯಿತು. ಅಲ್ಲೂ ಹಿಂದಿನದಕ್ಕಿಂತ ದೊಡ್ಡ ಜಾಹೀರಾತು. ಇದನ್ನು ಸೃಷ್ಟಿಸಿದ ವ್ಯಕ್ತಿಯ ಕಲೆ, ತಲೆ ಬಗ್ಗೆ ವಿಪರೀತ ಅಭಿಮಾನ ಉಂಟಾಗಿ ಸೌದಿ ಅರೇಬಿಯಾದ ಪ್ರಸಿದ್ಧ ಕೇಕ್ ಕಂಪೆನಿ ನಗರದ ತುಂಬಾ ಜಾಹೀರಾತಿನ ಮೆರವಣಿಗೆಯನ್ನೇ ಶುರು ಮಾಡಿದ್ದರು. 

ಚಿತ್ರ ದಲ್ಲಿರುವವನ ತಲೆ ಕೂದಲು, ಆ ದಾಡಿ, ಅವನ ಅವತಾರ ನೋಡಿದರೆ ತಿನ್ನುವ ಚಪಲ ಬಿಡಿ ವಾಕರಿಕೆ ಶುರುವಾಗುತ್ತದೆ.   

western bakeries “lusine” ಬ್ರಾಂಡ್  ಅಡಿಯಲ್ಲಿ ಸ್ವಾದಿಷ್ಟಕರವಾದ ತಿನಿಸುಗಳನ್ನು ಸೊಗಸಾಗಿ ಪ್ಯಾಕ್ ಮಾಡಿ ಮಾರುಕಟ್ಟೆಗೆ ಬಿಡುತ್ತದೆ. ಸೌದಿಯಲ್ಲಿರುವ  ಅತೀ ದೊಡ್ಡ ಏಕೀಕೃತ ಡಯರಿ ಫಾರ್ಮ್ ಗಳಲ್ಲಿ ಒಂದಾದ “ಅಲ್-ಮರೈ” ಒಡೆತನದ ಈ ಕೇಕ್ ಕಂಪೆನಿ ಜಾಹೀರಾತು ವಿಭಾಗದಲ್ಲಿ ಎಂಥ ಹೆಡ್ಡ ರನ್ನು ಕೆಲಸಕ್ಕಿಟ್ಟುಗೊಂಡಿದ್ದಾರೆಂದು ತಿಳಿಯಲಿ ಎಂದು ಕಂಪೆನಿಗೆ ಫೋನಾಯಿಸಿದೆ. ಗ್ರಾಹಕ ಸಂಪರ್ಕ ವಿಭಾಗದಿಂದ ಒಬ್ಬ ತರುಣಿ ಉತ್ತರಿಸಿದಳು. ಸ್ವರಮಾಧುರ್ಯ ಕೇಳಿ ಪುಳಕವಾಗಿ ನನ್ನನ್ನು ಬಾಧಿಸಿದ ವಿಷಯ ಹೇಳಿದೆ. ಈ ಜಾಹೀರಾತು sick looking, ಅಷ್ಟೇ ಅಲ್ಲ ಇದನ್ನು ನೋಡಿದ ಯಾವನೂ ನಿಮ್ಮ ಕೇಕ್ ತಿನ್ನಲಿಕ್ಕಿಲ್ಲ, ನೀನು ಮಹಿಳೆ ಆದ್ದರಿಂದ ಆ ಚಿತ್ರ ನಿಜಕ್ಕೂ ಹೇಗೆ ಕಾಣುತ್ತಿದೆ ಎಂದು ಹೇಳಲು ಆಗುತ್ತಿಲ್ಲ, ಎಂದು ಹೇಳಿದಾಗ ಅತ್ಯಂತ ಗಮನ ಕೊಟ್ಟು ಆಲಿಸಿದ ಲಲನಾ ಮಣಿ ತನಗೂ ಆ ಜಾಹೀರಾತು ಅಷ್ಟು ಚೆನ್ನಾಗಿ ಕಾಣಲಿಲ್ಲ, ಆದರೆ ನೌಕರಳಾಗಿ ನಾನೇನೂ ಹೇಳುವಂತಿಲ್ಲವಲ್ಲ, ನಿಮ್ಮ ದೂರನ್ನು ನಾನು ಮುಖ್ಯಸ್ಥರಿಗೆ ತಲುಪಿಸುತ್ತೇನೆ ಎಂದು ನನ್ನ ಹೆಸರು, ಮೊಬೈಲ್ ನಂಬರ್ ತೆಗೆದುಕೊಂಡಳು. ಸುಂದರ ಆಂಗ್ಲ ಭಾಷೆಯಲ್ಲಿ ಮಾತನಾಡುತ್ತಿದ್ದ ಆಕೆಯನ್ನು ಕೇಳಿದೆ ಯಾವ ದೇಶದವಳೆಂದು. ಹೇಳಿಯೇ ಬಿಟ್ಟಳು, ನಮ್ಮ ಪರಮ ಮಿತ್ರ, ಆಪತ್ಕಾಲವನ್ನು ಆಗಾಗ ನಮ್ಮ ಹೊಸ್ತಿಲಿಗೆ ತಂದು ನಿಲ್ಲಿಸುವ ದೇಶದವಳು, ಪಾಕಿಸ್ತಾನ ಎಂದು.

 
ಈಗ ಸೌದಿ ಅರೇಬಿಯಾದಲ್ಲಿ ಬಹುತೇಕ ಕಂಪೆನಿಗಳು ಮಹಿಳೆಯರನ್ನು ಕೆಲಸಕ್ಕಿಟ್ಟುಕೊಂಡಿವೆ, ನಮ್ಮ ಕಂಪೆನಿಯನ್ನು ಹೊರತು ಪಡಿಸಿ. ಅದಕ್ಕೇ ಇರಬೇಕು ನಮ್ಮ ಕಂಪೆನಿ ಎಂದರೆ ನನ್ನ ಶ್ರೀಮತಿಗೆ ಪ್ರೀತಿ ಸ್ವಲ್ಪ ಜಾಸ್ತಿ, ನನ್ನ ದಾರಿಗೆ distraction ತಂದು ಒಡ್ಡುತ್ತಿಲ್ಲವಲ್ಲ ಎಂದು.                   
 
ಜಾಹೀರಾತಿನ ಎಡ ತುದಿಯಲ್ಲಿ ಅರಬಿಯಲ್ಲಿ ಬರೆದಿರುವುದು “ಎಚ್ಚರಿಕೆ, ಕೇಕ್ನಲ್ಲಿ ಕ್ರೀಮ್ ಹೆಚ್ಚಾಗಿ ತುಂಬಲ್ಪಟ್ಟಿದೆ” ಎಂದು. ನಿಮಗೆ ಹೇಗೆ ಕಾಣುತ್ತದೆ, ಈ ಜಾಹೀರಾತಿನ ಚಿತ್ರ ನೋಡಿ?

ಮರುಭೂಮಿಯ ಎಲೆಮರೆಕಾಯಿ

ವಾರಾಂತ್ಯವಾದ್ದರಿಂದ ಮೊನ್ನೆ ಗುರುವಾರ ಜೆಡ್ಡಾ ದಿಂದ ೪೦೦ ಕಿ. ಮೀ ದೂರ ಇರುವ ಮದೀನಾ ನಗರಕ್ಕೆ ಹೊರಟೆವು ಪರಿವಾರ ಸಮೇತ. ಮಧ್ಯಾಹ್ನ ಬುತ್ತಿ ಕಟ್ಟಿಕೊಂಡು ( ಇಲ್ಲಿ ರಸ್ತೆಗೆ ತಾಗಿದ ಮರಳುಗಾಡಿನಲ್ಲಿ ಕಂಬಳಿ ಹಾಸಿ ಕೂತು ತಿನ್ನುವುದು ಒಂದು ರೀತಿಯ ಮೋಜು, ನಮ್ಮಲ್ಲಿನ ತೋಟದಲ್ಲಿ ಊಟದ ಥರ ) ಹೊರಟೆವು. ನಗರದ ಪರಿಮಿತಿ ಬಿಟ್ಟು ಸ್ವಲ್ಪ ದೂರ ಬರುತ್ತಲೇ ತಪಾಸಣಾ ನಿಲುಗಡೆ. ಸೌದಿ ಅರೇಬಿಯಾದಲ್ಲಿ ಎಲ್ಲಿ ನೋಡಿದರೂ ತಪಾಸಣೆಯೇ. ನಗರದ ಗಡಿ ಬಿಟ್ಟಾಗ, ಬೇರೆ ನಗರ ಪ್ರವೇಶಿಸುವಾಗ, ಇವೆರೆಡರ ನಡುವೆ random ಆಗಿ patrol ಮಾಡುವ ಪೋಲೀಸರ ತಪಾಸಣೆ ಅಲ್ಲಲ್ಲಿ. ೧೯೯೦ ರ ಕೊಲ್ಲಿ ಯುದ್ಧಾ ನಂತರ ಇಲ್ಲಿನ ಅರಸು ಮನೆತನಕ್ಕೆ ಮುನಿದು ಅಲ್ ಕೈದಾ ನಡೆಸಿದ ಕೆಲವು ಭಯೋತ್ಪಾದಕ ಚಟುವಟಿಕೆಗಳ ನಂತರ ಹೆಚ್ಚಿನ ಬಂದೋಬಸ್ತು. ಈಗ ಈ ದೇಶ ತುಂಬಾ ಸುರಕ್ಷಿತ. ಸರಿ ತಪಾಸಣಾ ನಿಲುಗಡೆ ಸಮೀಪಿಸುತ್ತಲೇ ನಾನು ಕಾರನ್ನು ನಿಧಾನಗೊಳಿಸಿ ಕಿಟಕಿಯ ಗಾಜನ್ನು ಇಳಿಸಿದೆ. ನನ್ನತ್ತ ನೋಡಿದ ಸುಮಾರು ಇಪ್ಪತ್ತರ ಚಿಗುರು ಮೀಸೆಯ ಮಂದಸ್ಮಿತ ಪೋಲಿಸ್ ಕೇಳಿದ ನಾನು ಯಾವ ದೇಶದವನೆಂದು. ನಾನು ಭಾರತೀಯ ಎಂದು ಹೇಳುತ್ತಿದ್ದಂತೆಯೇ ಆಹ್, ಹಿಂದಿ ಎನ್ನುತ್ತಾ ಸ್ವಾಗತ (ಮರ್ಹಬ) ಎಂದು ಅರಬ್ಬಿಯಲ್ಲಿ ಹೇಳಿ ನನ್ನ ಗುರುತು ಚೀಟಿ ಮತ್ತು ವಾಹನ ಚಾಲನಾ ಪರವಾನಗಿಯನ್ನು ತೆಗೆಯಲು ಬಿಡದೆ ಮುಂದೆ ಹೋಗಲು ಬಿಟ್ಟ. ಭಾರತೀಯರಿಗೆ ಅರಬರು ಹಿಂದಿ ಎಂದು ಕರೆಯತ್ತಾರೆ. ಹಿಂದ್ ದೇಶದವ ಎಂದರ್ಥ. ಕೆಲವು ಪಂಡಿತರ ಪ್ರಕಾರ ಹಿಂದೂ ಶಬ್ದ ಮೂಲವೂ ಅದೇ. ಅದೇ ಪದದಿಂದಲೇ ಹಿಂದೂ ಎನ್ನುವ ಪದವೂ ಬಂದಿದ್ದು. ಭಾರತೀಯರ ಮೇಲಿನ ಪೋಲಿಸ್ ಪೇದೆಯ ನಂಬುಗೆ ನೋಡಿ ನನಗೆ ಭಾರತೀಯನಾಗಿ ಹುಟ್ಟಿದ್ದು ಧನ್ಯ ಎನ್ನಿಸಿತು. ಈ ಮರ್ಯಾದೆ, ಆತಿಥ್ಯ  ಭಾರತದಲ್ಲೂ ನನಗೆ ಸಿಗಲಿಕ್ಕಿಲ್ಲವೇನೋ? ಭಾರತೀಯರು ತಮ್ಮ ದೇಶದ ಒಳಗೆ ಜಾತಿ ಧರ್ಮ, ಭಾಷೆ ಎಂದು ಹೇಗಾದರೂ ಕಚ್ಚಾಡಿಕೊಳ್ಳಲಿ, ಸಾಗರೋಲ್ಲಂಘನ ಅಥವಾ ಸೀಮೋಲ್ಲಂಘನ ಮಾಡಿದ ಕೂಡಲೇ ನಮ್ಮ identity ಎಲ್ಲಿ ಹೋದರೂ ಒಂದೇ. identical. ಭಾರತೀಯ. Indian. ಪೂರ್ಣ ವಿರಾಮ.

 ಭಾರತೀಯತೆಯೇ ಗುಣ, ಬಾಕಿ ಎಲ್ಲಾ ಗೌಣ.

 ಬೇರಾವುದೇ ದೇಶದವರನ್ನು ಕಂಡರೂ, ವಿಶೇಷವಾಗಿ ಪಾಕಿ, ಆಫ್ಘನ್ ರನ್ನು ಕಂಡರಂತೂ ಪೊಲೀಸರಿಗೆ ದೊಡ್ಡ ಕೆಲಸ. ಬರೀ ಅವರ ಕಾಗದ ಪತ್ರ, ಜಾತಕವಲ್ಲ, ವಾಹನವನ್ನೂ ಕೆಳಗೆ ಮೇಲೆ ಎಂದು ಕನ್ನಡಿ ಹಿಡಿದು ಪರೀಕ್ಷಿಸಿ ಮುಂದೆ ಬಿಡುತ್ತಾರೆ. ಅಂಥ reputation ಅವರದು. ಹೊಡಿ ಬಡಿ ಕಡಿ ಎಂದರೆ ಇವರುಗಳು ಮುಂದೆ. ಹೆಚ್ಚು ಮಾತನಾಡಿದರೆ ಪೇದೆಯನ್ನೂ ತದುಕಲು ಹೆದರುವುದಿಲ್ಲ. ಹಾಗಾಗಿ ಇವರಿಗೆ ತಪಾಸಣಾ ಸ್ಥಳಗಳಲ್ಲಿ ವಿಶೇಷ ಮನ್ನಣೆ ಮತ್ತು ಮಣೆ. ವಿಷದ ಹಲ್ಲು ಇಲ್ಲ ಎಂದು ಚೆನ್ನಾಗಿ ಖಾತ್ರಿ ಪಡಿಸಿಕೊಂಡ ನಂತರವೇ ಹಸಿರು ನಿಶಾನೆ ಮುಂದೆ ಹೋಗಲು. ಆದರೆ ಭಾರತೀಯ ಹಾಗಲ್ಲ, ತಾನಿರುವ ನಾಡಿನ ಕಾನೂನಿಗೆ ತಲೆಬಾಗಿ ಇರುವಷ್ಟು ದಿನ ಯಾವ ತಕರಾರುಗಳಿಗೂ ಹೋಗದೆ ಎಲೆಮರೆಕಾಯಿಯಂತೆ ತನ್ನ ಪಾಡಿಗೆ ದುಡಿದು ದಣಿದು ಬಂದು ರೂಮಿನಲ್ಲಿ ತನ್ನ ಪ್ರೀತಿ ಪಾತ್ರರ ಭಾವ ಚಿತ್ರಗಳನ್ನು ನೋಡುತ್ತಾ ಮುದುಡಿ ಬಿದ್ದಿರುತ್ತಾನೆ ತನ್ನ ನಾಡಿನ ಕನಸನ್ನು ಕಾಣುತ್ತಾ.  

 ಈ ದೇಶದ ಬಿಗಿಯಾದ ಕಾನೂನಿನ ಬಗ್ಗೆ ಒಂದೆರಡು ಮಾತುಗಳನ್ನೂ ಹೇಳುತ್ತೇನೆ, ಮತ್ತು ಇಂಥವನ್ನು ನಾವೂ ಅಳವಡಿಸಿಕೊಂಡರೆ ಮುಂಬೈಯಲ್ಲಿ ಪಾಕಿ ಪಾತಕಿಗಳು ನಡೆಸಿದ ನರಸಂಹಾರದಂಥ ಘಟನೆಗಳು ಮರುಕಳಿಸದಂತೆ ತಡೆಗಟ್ಟಬಹುದು. ಈ ದೇಶಕ್ಕೆ ಉದ್ಯೋಗಕ್ಕಾಗಿ ಬರುವ ಪ್ರತಿಯೊಬ್ಬನೂ ತನ್ನ ಪಾಸ್ ಪೋರ್ಟನ್ನು ತನ್ನ ಯಜಮಾನನಿಗೆ (employer) ಒಪ್ಪಿಸಿ ಅದರ ಬದಲಿಗೆ “ಇಕಾಮ” ಎಂದು ಕರೆಯಲ್ಪಡುವ ಗುರುತಿನ ಕಾರ್ಡನ್ನು ಪಡೆಯಬೇಕು. ಈ ಕಾರ್ಡನ್ನು ತಾನು ತನ್ನ ರೂಮನ್ನು ಬಿಟ್ಟು ಎಲ್ಲೇ ಹೋದರೂ ಜೊತೆಗೇ ಒಯ್ಯಬೇಕು. ಅಲ್ಲಲ್ಲಿ ನಡೆಯುವ random ತಪಾಸಣೆಗಳಲ್ಲಿ ಗುರುತು ಚೀಟಿ ಇಲ್ಲದ್ದನ್ನು ಕಂಡರೆ ಯಾವುದೇ ಸಮಜಾಯಿಷಿಗೂ ಕಿವಿಗೊಡದೆ ಒಳಗೆ ತಳ್ಳುತ್ತಾರೆ. ಚೀಟಿಯನ್ನು ತಂದ ನಂತರವೆ ಬಿಡುಗಡೆ. ಹಜ್ ಸಮಯದಲ್ಲಿ ತಪಾಸಣೆ ಸ್ವಲ್ಪ ಜೋರು. ಯಾತ್ರಾರ್ಥಿಯಾಗಿ ಬಂದು ಮರಳಿ ತಮ್ಮ ದೇಶಕ್ಕೆ ವಾಪಸು ಹೋಗದೆ ದುಡಿಯಲು ಇಲ್ಲೇ ಉಳಿದು ಕೊಳ್ಳುವ ಜನರು ಅಸಂಖ್ಯ. ಅವರಲ್ಲಿ ಬಡ ರಾಷ್ಟ್ರಗಳ ಅರಬರು ಮತ್ತು ಆಫ್ರಿಕನ್ನರು ಹೇರಳ. ಹೀಗೆ ಅಕ್ರಮವಾಗಿ ಉಳಿದು ಕೊಳ್ಳುವ ಯಾವ ದೇಶದವನೇ ಆಗಲಿ, ಮುಸ್ಲಿಮನೇ ಆಗಿರಲಿ ಯಾವ ರಿಯಾಯ್ತಿಯೂ ಇಲ್ಲ. forced deportation.  

 ಮೇಲೆ ಹೇಳಿದ ಮದೀನಾ ಹೋಗುವ ದಾರಿಯಲ್ಲಿನ  ತಪಾಸಣೆ ಮುಗಿದ ಕೂಡಲೇ, ದೇವನೊಬ್ಬನೇ ಆರಾಧನೆಗೆ ಅರ್ಹ ಎಂದು ವಿಶ್ವ ಕೇಳುವಂತೆ ಮೊಳಗಿಸಿ, ಸಮಾನತೆಯ ಕಹಳೆ ಊದಿದ ಮರಳುಗಾಡಿನ ನಿರಕ್ಷರಕುಕ್ಷಿ, ಸಂಪತ್ತು, ಕೀರ್ತಿ ನಶ್ವರ, ದೈವಭಕ್ತಿ, ಸನ್ನಡತೆಯೇ ಶಾಶ್ವತ ಎಂದು ಜಗಕ್ಕೆ ಹೇಳಿ ಕೊಟ್ಟ ಮಹಾ ಪ್ರವಾದಿಯ ಪ್ರೀತಿಯ ಪಟ್ಟಣದ ಕಡೆ ಕಾರು ಸಾಗುತ್ತಿದ್ದಂತೆ ನನಗೊಂದು ಕರೆ ಬಂದಿತು. ನಮ್ಮ ಕಂಪೆನಿಯಲ್ಲಿ ಕೆಲಸ ಮಾಡುವ store assistant ನನ್ನು ಗುರುತು ಚೀಟಿ ಇಲ್ಲದೆ ತನ್ನ ರೂಮಿನ ಹೊರಗಿನ browsing center ಹತ್ತಿರ ಅಡ್ಡಾಡುತ್ತಿದ್ದ ಎಂದು ಪೊಲೀಸರು ಬಂಧಿಸಿದರು ಎಂದು ಸುದ್ದಿ. ಜೆಡ್ಡಾ ಬಿಟ್ಟು ತುಂಬಾ ದೂರ ಬಂದಿದ್ದರಿಂದ ನಾನು ನಮ್ಮ ಮಾನವ ಸಂಪನ್ಮೂಲ ವಿಭಾಗದ ಸೌದಿಗೆ ಫೋನಾಯಿಸಿ ವಿಚಾರಿಸಲು ಹೇಳಿದೆ. ಸೌದಿಯ ವಿವರಣೆಗೂ ಪೊಲೀಸರು ಜಪ್ಪಯ್ಯ ಎನ್ನಲಿಲ್ಲ. ಕೊನೆಗೆ ಬಹಳಷ್ಟು ಮನವಿಯ ನಂತರವೇ ಆತನನ್ನು ಅವರು ಬಿಟ್ಟಿದ್ದು. ಹಿಡಿಯಲ್ಪಟ್ಟವನು ಮುಸ್ಲಿಂ ಮಾತ್ರವಲ್ಲ, ಪೊಲೀಸರು ಮರ್ಯಾದೆ ಕೊಡುವ, ಗೌರವಿಸುವ ವಿಶ್ವಾಸಿಗಳು ಬಿಡುವ  ದೊಡ್ಡ ಗಡ್ದವನ್ನೂ ಹುಲುಸಾಗಿ ಬೆಳೆಸಿದ್ದ. ಊಹೂಂ, ಚೀಟಿ ಇಲ್ಲವೋ ನಡಿ ಮಾವನ ಮನೆಗೆ ಎಂದರು ಪೊಲೀಸರು. ಧರ್ಮ, ಜಾತಿ ಎಲ್ಲಾ ಆಮೇಲೆ. ಈ ಗುರುತಿನ ಚೀಟಿಯ ನಿಯಮ ಬರೀ ವಿದೇಶೀಯರಿಗೆ ಮಾತ್ರವಲ್ಲ, ಸೌದಿ ಗಳೂ “ಬುತಾಕ” ಅಥವಾ “ಹವ್ವಿಯ್ಯ” ಎನ್ನುವ ಕಾರ್ಡನ್ನು ಹೊಂದಿರಲೇಬೇಕು. ಬ್ಯಾಂಕಿನಲ್ಲಿ ಹಣ ಪಾವತಿಸುವಾಗಲಾಗಲಿ, ಬೇರೆ ಯಾವುದೇ ಕಾರ್ಯಗಳಿಗೂ ಮೊದಲಿಗೆ ಕಾರ್ಡ್ ನ ದರ್ಶನ ಆಗಬೇಕು, ಇಲ್ಲದಿದ್ದರೆ ಕಾನೂನಿನ ದುರ್ದರ್ಶನ. ನಾನು ಮನೆಯಲ್ಲಿ ಮರೆತೆ, ಅತ್ತೆ ಮನೆಯಲ್ಲಿ ಬಿಟ್ಟು ಬಂದೆ ಹಾಗೆ ಹೀಗೆ ಎಂದು ಕತೆಗಳನ್ನ ನೇಯ್ದರೆ ಅವು ನಮ್ಮ ಕಿವಿಗಳಿ ಗೇ ಇಂಪು. ಕೇಳಿಸಿಕೊಳ್ಳುವವನ ಕಿವಿಗಲ್ಲ. ಎಷ್ಟೋ ಜನ ಸೌದಿಗಳು ಗೊಗರೆಯುವುದನ್ನು  ನೋಡಿದ್ದೇನೆ, ನಾನು ಕಾರ್ಡನ್ನು ಮರೆತು ಬಂದೆ, ನನ್ನ ಕೆಲಸ ಮಾಡಿ ಕೊಡು ಎಂದು. ಕೇಳುವವರು ಬೇಕಲ್ಲ.  ನಮ್ಮ ದೇಶದಲ್ಲೂ ಇಂಥ ಒಂದು ಕಟ್ಟುನಿಟ್ಟಿನ ವ್ಯವಸ್ಥೆ ಇರಬೇಕು. ಎಷ್ಟೇ ಹಣ ಖರ್ಚಾದರೂ ಭಾರತದ ಪ್ರತೀ ಪೌರನಿಗೆ ಒಂದು ಗುರುತು ಚೀಟಿಯನ್ನು ಹೊಂದಿಸಲೇ ಬೇಕು.

 ಅಕ್ರಮವಾಗಿ ನಮ್ಮ ಗಡಿ ಹಾರಿ ಬರುವ ನೇಪಾಳಿ ಮತ್ತು ಇತರೆ ದೇಶಗಳ ಜನರನ್ನು ತಡೆಯಲು ಇದೇ ಮಾದರಿಯ ಕಾರ್ಡು ಮತ್ತು ತಪಾಸಣೆ ನಮಗಿರಬೇಕು. ಅದಕ್ಕೆ ತಗಲುವ ಖರ್ಚು ದುಂದು ಖರ್ಚಲ್ಲ.  ದೇಶದ ಗಡಿ, ಜನ ಸುರಕ್ಷಿತವಾಗಿರಬೇಕೆಂದರೆ ನಾವು ನಿಷ್ಟುರರಾಗಿರಬೇಕು. ನಮ್ಮ ಒಳ್ಳೆಯತನವನ್ನು, ಹೃದಯ ವೈಶಾಲ್ಯತೆಯನ್ನು  ದೇಶದ ಒಳಗೆ ನೆಲೆಸಿ ಕೊಂಡಿರುವ ಸಹ ಭಾರತೀಯರಿಗೆ ಮಾತ್ರ ಮೀಸಲಿಟ್ಟರೆ ಸಾಕು.